ಅನಿವಾಸಿಯ ಬಳಗಕ್ಕೆ ನಮಸ್ಕಾರ. 2025ರ ಹೊಸವರ್ಷದಲ್ಲಿಯ ನನ್ನ ಮೊದಲ ಸಂಚಿಕೆಗೆ ನಿಮ್ಮೆಲ್ಲರ ಸ್ವಾಗತ. ಅನಿವಾಸಿ ಬಳಗದ ಉತ್ಸಾಹ ಹೆಚ್ಚುತ್ತಿರುವುದಕ್ಕೆ ಇತ್ತೀಚೆಗೆ ನಡೆದ ದಶಮಾನೋತ್ಸವ, ಹೊಸ ಸದಸ್ಯರುಗಳ ಆಗಮನ, ಬರವಣಿಗೆ ಇತ್ತ್ಯಾದಿಗಳೇ ಸಾಕ್ಷಿ. ಇದರ ಜೊತೆಯಲ್ಲೇ, ಕೆಲವೇ ವಾರಗಳ ಹಿಂದೆ (ಕಳೆದ ವರ್ಷ ಅನ್ನಬಹುದಿತ್ತೇನೋ, ಆದರೆ ಎಷ್ಟೋ ದಿನ ಆದಂತೆ ಅನ್ನಿಸುವುದರಿಂದ ಬೇಡ ಅಂದುಕೊಂಡೆ) ಸಕ್ಕರೆಯ ನಾಡು, ಮಂಡ್ಯದಲ್ಲಿ ಹಿರಿಯ ಸಾಹಿತಿ ಶ್ರೀ ಗೋ ರು ಚನ್ನಬಸಪ್ಪನವರ ಅಧ್ಯಕ್ಷತೆಯಲ್ಲಿ ನಡೆದ 87ನೆಯ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲೆಂದೇ ನಮ್ಮ ಅನಿವಾಸಿ ಬಳಗದ ಪ್ರತಿನಿಧಿಯಾಗಿ ತೆರಳಿದ್ದರು ನಮ್ಮ ನವೀನ್. ಅವರು ಬರೆದ ವರದಿ ಇಲ್ಲಿ ಕೆಳಗಿದೆ. ಅವರೇ ತೆಗೆದ ಹಲವು ಚಿತ್ರಗಳೂ ಜೊತೆಯಲ್ಲಿವೆ - ಅದರಲ್ಲಿ ಪರಿಚಿತ ಮುಖಗಳಿವೆ, ನೋಡಿ.
ಜೊತೆಯಲ್ಲಿ ನಮ್ಮ ಗೋಪಾಲಕೃಷ್ಣ ಹೆಗಡೆಯವರ ಒಂದು ಕವನವಿದೆ, ಹೊಸವರ್ಷದ ಆಶಯಗಳೊಂದಿಗೆ. ಅವರದ್ದೇ ಮಾತಿನಲ್ಲಿ ಕವನದ ಹುಟ್ಟಿನ ಪರಿಚಯವೂ ಇದೆ.
ಕೊನೆಯ ಕೊಸರಿನಂತೆ, ಹೆಗ್ಡೆಯವರದೊಂದು ಚಿತ್ರಕ್ಕೆ ನನ್ನದೊಂದು ಕಿರು ಕವನವನ್ನೂ ಹಾಕಿಬಿಟ್ಟಿದ್ದೇನೆ, ತಡೆಯಲಾರದೆ. ಕ್ಷಮೆಯಿರಲಿ.
ಇತ್ತೀಚಿಗಷ್ಟೆ ೮೭ನೆ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಿತು. ಅದಕ್ಕಂತಲೇ ನಾನು ಭಾರತಕ್ಕೆ ಹೋಗಿದ್ದೆ. ಬಹಳ ವರ್ಷಗಳಿಂದಲೂ ಸಮ್ಮೇಳನದಲ್ಲಿ ಭಾಗಿಯಾಗುವ ತವಕವಿತ್ತು. ಆದರೆ ಆ ಸುಸಂದರ್ಭ ಈಗ ದೊರಕಿತು. ಬಹಳ ನಿರೀಕ್ಷಣೆಯಿಂದ ಸಿದ್ಧತೆ ಮಾಡಿಕೊಂಡಿದ್ದೆ. ಸಾಹಿತ್ಯ ಸಮಾರೋಪದಲ್ಲಿ ಸಾಕಷ್ಟು ಸಾಹಿತ್ಯದಬಗ್ಗೆ, ಕನ್ನಡ ಭಾಷೆ ಬಗ್ಗೆ ಕೇಳಿಬರುತ್ತದೆ, ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿರುವಸಾಹಿತಿ, ಕವಿ, ಬರಹಗಾರರ ನಡುವೆ ನಡೆದಾಡಿ, ಅವರನ್ನು ಆಲಿಸಿ ಅವರಿಂದ ಪ್ರೇರಣೆ ಪಡೆಯುವುದಲ್ಲದೆ, ಕನ್ನಡ ಭಾಷಾಕ್ಷೇತ್ರದಲ್ಲಿ ಎಂಥಹ ಬೆಳವಣಿಗೆ ರೂಪಗೊಂಡಿದೆ ಎಂದು ಕಾಣುವ ಹಂಬಲ ಬೆಳಸಿಕೊಂಡಿದ್ದೆ. ಇದಕ್ಕನುಗುಣವಾಗಿ ಲೀಡ್ಸ್ನಲ್ಲಿ ಮಾಡುತಿದ್ದ ಕೆಲಸವನ್ನು ಮೊಟಕುಗೊಳಿಸಿ ಹತ್ತಿದೆ, ಯುನೈಟೆಡ್ ಕಿಂಗ್ಡಮ್ನ ರಾಯಭಾರಿಯಂತೆ ಭಾವಿಸಿ. ಯಾಕಂದರೆ ನನಗೆ ತಿಳಿದಿರಲಿಲ್ಲ ಬೆರ್ಯಾರಾದರು ಇಲ್ಲಿಂದ ಹೋಗುವರೇನೋ ಅಂತ. ಆದರೆ ಅಲ್ಲಿಗೆ ಹೋದಮೇಲೆ ಲಂಡನಿನಿಂದ ಬಂದಿದ್ದ ಇನ್ನಿಬ್ಬರನ್ನು ಭೇಟಿಮಾಡಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಮಹೇಶ್ ಜೋಶಿಯವರು ಕೆಲವೇ ದಿನಗಳ ಹಿಂದೆ ಬಂದು ನಮ್ಮೆಲ್ಲರಿಗೂ ಆಮಂತ್ರಣ ಕೊಟ್ಟಿದ್ದರು. ನಮ್ಮ ದೇಶವಲ್ಲದೆ ಕನ್ನಡಿಗರಿರುವ ಹತ್ತಾರು ರಾಷ್ಟ್ರಗಳಿಗೂ ಹೋಗಿ ವೈಯಕ್ತಿಕವಾಗಿ ಅಭಿಮಾನಿಗಳು ಭಾಗವಹಿಸಬೇಕೆಂದು ವಿನಂತಿಸಿಕೊಂಡಿದ್ದರು. ಕನ್ನಡ ಸಾಹಿತ್ಯ ಪರಿಷತ್ತು ಹಾಗು ಸಾಹಿತ್ಯ ಸಮ್ಮೇಳನ ಬರೇ ಕರ್ನಾಟಕದ ಕನ್ನಡ ಜನರ ತಾಣವಲ್ಲ, ಅವು ಪ್ರಪಂಚದ ಎಲ್ಲೆಡೆ ನೆಲಸಿ ತಮ್ಮ ತಾಯ್ನಾಡನ್ನ ಮರೆಯದ ಜನಸಮುದಾಯದ ಸಂಸ್ಥೆಗಳು ಎಂದು ಸಾರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ನಾನು ಗುರುವಾರ ೧೯ನೆ ತಾರೀಖಿನಂದೇ ಮಂಡ್ಯಕ್ಕೆ ಹೊರಟೆ. ವಿದೇಶದಿಂದ ಬರುವ ಎಲ್ಲ ಪ್ರತಿನಿಧಿಗಳಿಗೆಂದೇ ವಿಶೇಷ ವ್ಯವಸ್ಥೆ ಬಹಳ ದಿನಗಳಿಂದಲೇ ರೂಪಗೊಂಡಿತ್ತು. ಮೈಸೂರಿನ ಸಂದೇಶ್ ಪ್ರಿನ್ಸ್ನಲ್ಲಿ ನಮಗೆ ಉಳಿದುಕೊಳ್ಳುವ, ಅಲ್ಲಿಂದ ಪ್ರತಿದಿನ ಸಮ್ಮೇಳನ ನಡೆಯುವ ಮಂಡ್ಯಕ್ಕೆ ಹೋಗಿಬರುವ ಸಾರಿಗೆ ಏರ್ಪಾಟು ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ನಿವೇದಿತಾ ಹೊನ್ನತ್ತಿಯವರ ನೇತೃತ್ವದಲ್ಲಿ ಬಹಳ ಅಚ್ಚುಕಟ್ಟಾಗಿ ಯೋಜಿಸಿ ಕಾರ್ಯಗತ ಮಾಡಲಾಗಿತ್ತು. ನನ್ನ ಭಾಷೆಯ ಸಮ್ಮೇಳನಕ್ಕೆ ನಾನೇ ಎಲ್ಲ ಖರ್ಚುಗಳನ್ನ ವಹಿಸಿಕೊಂಡು ಸರ್ಕಾರಕ್ಕಾಗಲಿ ಪರಿಷತ್ತಿಗಾಗಲಿ, ಸಮ್ಮೇಳನ ಸಂಚಾಲಕ ಇಲಾಖೆಗಾಗಲಿ ಋಣಿಯಾಗಬಾರದೆಂದಿದ್ದೆ. ಆದರೆ ನಮಗ್ಯಾವ ಕುಂದುಕೊರತೆಯಾಗದೆ, ಶುಲ್ಕವೂಯಿಲ್ಲದೆ ವಸತಿ, ಊಟ, ಜೊತೆಗೆ ಮನರಂಜನೆ, ಸಾಹಿತ್ಯ ರಸದೌತಣ ಉಣಿಸಿದ ಎಲ್ಲರಿಗೂ ನಾವು ಚಿರಋಣಿಯಾಗಿರಬೇಕು.
ಮಂಡ್ಯದಲ್ಲಿ ಅದೊಂದು ದೊಡ್ಡ ‘ಕುಂಭಮೇಳ’ ಅನ್ನಬೇಕು. ವಿಶಾಲ ಜಾಗ, ಲಕ್ಷಾಂತರ ಜನರು ಕೂರುವಂಥ ಸಭಾಂಗಣ, ಅದಕ್ಕೆ ತಕ್ಕಂಥ ಅದ್ದೂರಿ ಪ್ರವೇಶದ್ವಾರ, ದೃಷ್ಟಿಯಗಲಕ್ಕೂ ಮೀರಿದ ವೇದಿಕೆ, ಮಹಾಮಂಟಪ, ಅಲ್ಲಲ್ಲೇ ನೋಡಲನುಕೂಲವಾಗುವಂಥ ಕ್ಲೋಸ್ಡ್-ಸರ್ಕ್ಯೂಟ್ ಟಿವಿ, ಹೊರಗಿದ್ದರೂ ಕೇಳಿಸಿಕೊಳ್ಳುವಂಥ ಧ್ವನಿ ವ್ಯವಸ್ಥೆ, ಇವೆಲ್ಲ ದೊಡ್ಡ ಪ್ರಮಾಣದ ವಿನ್ಯಾಸವೆಂತಲೇ ಭಾವಿಸಬೇಕು.
ಸಮ್ಮೇಳನದ ವಿಶೇಷತೆ ಅದರ ಸಭಾಧ್ಯಕ್ಷರಾದ ನಾಡೋಜ ಗೊ ರು ಚನ್ನಬಸಪ್ಪನವರು. ೯೪ ವರ್ಷಗಳಾಗಿದ್ದರೂ ಅವರ ಮಾತಿನಲ್ಲಿದ್ದ ಸ್ಪಷ್ಟತೆ, ಶಬ್ದಭಂಡಾರ, ನಿರರ್ಗಳತೆ ಎಂತಹವರನ್ನೂ ಮೋಡಿ ಮಾಡುವಂಥದು. ನೇರವಾಗಿ ಸರ್ಕಾರಕ್ಕೆ ಮತ್ತು ವಾಣಿಜ್ಯ ಉದ್ಯಮಿಗಳಿಗೆ ಕರೆ ಕೊಟ್ಟರು. ಕನ್ನಡ ಭಾಷೆ ಉಳಿಯಲು ಬೆಳೆಸಲು ಅವರಿಂದ ಯಾವ ತರಹದ ಉತ್ತೇಜನ ದೊರಕಬೇಕು, ಅದರಲ್ಲೂ ಆರ್ಥಿಕ ಹೊಣೆ ವಹಿಸಿಕೊಳ್ಳಬೇಕೆಂದು. ಕನ್ನಡ ವಿಶ್ವವಿದ್ಯಾನಿಲಯ, ಕನ್ನಡ ಶಾಲೆಗಳು ಮುಚ್ಚುವಂಥ ಸ್ಥಿತಿಯನ್ನು ತಡೆಗಟ್ಟಲು ಸರ್ಕಾರ ಯಾವ ಕ್ರಮ ಕೈಗೊಳ್ಳಬೇಕು ಎಂದು ವೇದಿಕೆ ಮೇಲಿದ್ದ ರಾಜಕೀಯ ಮುಖಂಡರಿಗೆ ಮನದಟ್ಟು ಮಾಡಿದರು. ಕನ್ನಡ ಪ್ರಾಚೀನ ಭಾಷೆಯಾಗಿದ್ದರೂ ಇಂದಿನ ತಂತ್ರಜ್ಞಾನ ಅಳವಡಿಸಿಕೊಂಡು, ಎಲ್ಲರಿಗೂ, ಅದರಲ್ಲೂ ಪ್ರಚಲಿತ ಯುವಪೀಳಿಗೆಗೆ ತಟ್ಟುವಂಥ ಮಾರ್ಪಾಟು ಮಾಡಿಕೊಳ್ಳಬೇಕು ಎಂದು ಕರೆಯಿತ್ತರು. ಇದರ ಜೊತೆಗೆ ಅವರು ಮತ್ತಿತರ ಮಹತ್ತರ ವಿಷಯಗಳನ್ನೂ ಚರ್ಚಿಸಿದರು. ಶಿಕ್ಷಣ ಮಾಧ್ಯಮ, ಅಂತರ-ರಾಜ್ಯ ಭಾಷಾವಿನಿಮಯ, ಕನ್ನಡ ಕಲಿಕಾ ಕೇಂದ್ರಗಳು, ಪರಿಸರ ಸಂರಕ್ಷಣೆ, ಧರ್ಮದ ದುರುಪಯೋಗ, ಮಹಿಳಾ ಸಮಾನತೆ ಹಾಗು ಸ್ವಾಯತ್ತತೆ, ಕನ್ನಡಿಗರ ಉದ್ಯೋಗ ಬದುಕು, ಪ್ರವಾಸೋದ್ಯಮ, ಮುಂತಾದ ವಿಚಾರಗಳನ್ನು ಎತ್ತಿ ತೋರಿಸಿ ಆ ದಿಕ್ಕಿನಲ್ಲಿ ಏನೆಲ್ಲಾ ಕೆಲಸಕಾರ್ಯಗಳು ನಡೆಯಬೇಕಾಗಿದೆ ಎಂದು ವಿವರಿಸಿದರು.
ಕೆಲವರ ಭಾಷಣಗಳು ತೀರ್ವವಾಗಿದ್ದವು. ಮುಖ್ಯಮಂತ್ರಿ ಚಂದ್ರುರವರು ಸಭಾಧ್ಯಕ್ಷರು ಉಲ್ಲೇಖಿಸಿದ ವಿಷಯಗಳಲ್ಲಿ ಸರ್ಕಾರ ವರ್ಷದಿಂದ ವರ್ಷಕ್ಕೆ ಅನುಸರಿಸುತ್ತಿರುವ ನಿರ್ಲಕ್ಷರೀತ್ಯಕ್ರಮವನ್ನು ಕಟುವಾಗಿ ರಾಜಕೀಯ ಮುಖಂಡರ ಮುಂದೆಯೇ ಟೀಕಿಸಿದರು. ಪ್ರತಿ ಸಮ್ಮೇಳನದಲ್ಲೂ ದೊಡ್ಡ ದೊಡ್ಡ ಭಾಷಣಗಳು ಆಗುತ್ತವೆ, ಮುಂದೆ ಮಾಡಬೇಕಾದ ಅಭಿವೃದ್ಧಿ ಕೆಲಸಗಳ ನಿರ್ಣಯವೂ ಆಗುತ್ತೆ, ಆದರೆ ಸಮ್ಮೇಳನ ತದನಂತರ ಅವೆಲ್ಲ ಒಣಆಶ್ವಾಸನೆಗಳಾಗೆ ಉಳಿಯುತ್ತವೆ ಎಂದು ಆಕ್ಷೇಪಿಸಿದರು.
ಅನೇಕ ಕವಿಗೋಷ್ಠಿಗಳು, ಉಪನ್ಯಾಸಗಳು, ಸಮಾಲೋಚನೆಗಳು ಮೂರು ದಿನಗಳಲ್ಲೂ ಹಬ್ಬಿಕೊಂಡು ಕಿಕ್ಕಿರಿದು ತುಂಬಿದ ಮಂಡ್ಯ ಜನಸಮೂಹಕ್ಕೆ ಒಂದು ರೀತಿಯ ಜ್ಞಾನೋದಯ ಉಂಟುಮಾಡಿತು. ಬೆಳಿಗ್ಗೆಯಿಂದ ಸಂಜೆವರೆಗೂ ಈ ಕಾರ್ಯಕ್ರಮಗಳಾದ ಮೇಲೆ ಮನರಂಜನೆ ಸಾಗುತಿತ್ತು. ಒಂದು ದಿನ ಸಾಧು ಕೋಕಿಲ, ಮತ್ತೊಂದು ಸಂಜೆ ಅರ್ಜುನ ಜನ್ಯ ನೆರೆದಿದ್ದ ಯುವಕ ಯುವತಿಯರನ್ನು ಕುರ್ಚಿ ಮೇಲೆಯೇ ನಿಂತು ಕುಣಿದಾಡುವಂತೆ ಮಾಡಿದರು.
ಪುಸ್ತಕ ಮಳಿಗೆಗಳು ಮತ್ತೊಂದು ವೈಶಿಷ್ಟತೆ. ಕೊಂಡುಕೊಳ್ಳುವರಿಗಂತೂ ಅದೊಂದುಹಬ್ಬವೇ. ಬಹುಷಃ ಇಲ್ಲಿವರೆಗೆ ಪ್ರಕಟವಾಗಿರುವ ಎಲ್ಲ ಕಾದಂಬರಿಗಳು ನಾಟಕಗಳುಕಾವ್ಯಗಳು, ಇತರೆ ಅನೇಕ ಬರವಣಿಗಗಳು ಮಳಿಗೆಗಳಲ್ಲಿ ರಾರಾಜಿಸುತ್ತಿದ್ದವು. ಪ್ರಕಾಶಕರುಅಲ್ಲಿ ತಮ್ಮ ತಮ್ಮ ಪ್ರಕಟಣೆಗಳನ್ನು ಸಾಲು ಸಾಲು ಅಂಗಡಿಗಳಲ್ಲಿ ಬಿತ್ತರಿಸಿ ೫೦%ಗೂ ಮಿಗಿಲಾಗಿ ರಿಯಾಯಿತಿ ಕೊಟ್ಟು ಓದುಗರನ್ನು ಪ್ರೇರೇಪಿಸುತ್ತಿದ್ದರು. ಅಷ್ಟೊಂದು ಪುಸ್ತಕಗಳು ಒಂದೇ ಜಾಗದಲ್ಲಿ ಪ್ರದರ್ಶನವಾದದನ್ನು ಬಹುಷಃ ನಾನು ನೋಡಿರಲಿಲ್ಲ.
ವಿದೇಶಿ ಕನ್ನಡಿಗರ ಸಂಘಟನೆ ಈ ಸಮ್ಮೇಳನದ ಮತ್ತೊಂದು ವೈಶಿಷ್ಟ್ಯಪೂರ್ಣಕಾರ್ಯಕ್ರಮ. ಯುರೋಪ್, ಅಮೇರಿಕಾ, ಆಸ್ಟ್ರೇಲಿಯಾ ದೇಶಗಳ ಜೊತೆಗೆ ಅನೇಕ ಏಷ್ಯಾರಾಷ್ಟ್ರಗಳ ಕನ್ನಡಿಗರು ನೆರೆದಿದ್ದರು. ಅವರೊಡನಾದ ಸ್ನೇಹ-ಪರಿಚಯ ಪರಸ್ಪರಕ್ರಿಯೆ ಬಹಳ ಕಾಲ ಉಳಿಯುವಂಥದು. ನಾನು ಬಹಳಷ್ಟು ವಿದೇಶಿ ಕನ್ನಡಿಗರನ್ನು ಪರಿಚಯಿಸಿಕೊಂಡು ಅವರ ದೇಶಗಳಲ್ಲಿ ಜರುಗುತ್ತಿರುವ ಕನ್ನಡ ಕಲಿಸುವಂಥ ಶಾಲೆಗಳ ಬಗ್ಗೆ, ಕನ್ನಡ ಸಾಂಸ್ಕೃತಿಕ ಚಟುವಟಿಕೆಗಳ ಬಗ್ಗೆ ತಿಳಿದುಕೊಂಡೆ. ನಾವು ರಾಜ್ಯ ದೇಶ ಬಿಟ್ಟುಹೋಗಿದ್ದರೂ, ನಮ್ಮ ಕನ್ನಡ ನಮ್ಮೆಲ್ಲರನ್ನೂ ಒಂದುಗೂಡಿಸುತ್ತಿರುವ ಪರಿ ಎಲ್ಲರಿಗೂ ಅಗಾಧ ಸಂತಸ ತಂದಿರುವುದನ್ನ ಎಲ್ಲರಲ್ಲೂ ಕಂಡೆ. ಮುಂದೆ ನಾವೆಲ್ಲ ಸೇರಿ ಯಾವ ರೀತಿಯ ಕೊಡುಗೆ ಕೊಡಲು ಸಾಧ್ಯ ಅನ್ನುವುದನ್ನು ಕೂಲಂಕಶವಾಗಿ ಚರ್ಚಿಸಿ ಕಾರ್ಯಗತ ಮಾಡುವುದಕ್ಕೆ ಅನುವು ಮಾಡಿಕೊಟ್ಟಿದೆ ಕನ್ನಡ ಸಾಹಿತ್ಯ ಸಮ್ಮೇಳನ.
ಒಟ್ಟಿನಲ್ಲಿ ಈ ಸಮ್ಮೇಳನ ನನಗೊಂದು ಅಪೂರ್ವ ಅನುಭವ!
- ನವೀನ
*******************************************
ಆಕಾಶದ ಆಶೆ -ಹೊಸ ವರುಷಕೆ!
(ಮುನ್ನುಡಿ: ಹೊಸವರ್ಷವೆಂದರೆ ನನಗೆ ಅದರಲ್ಲಿ ಕಂಡಿದ್ದು ಬರೇ ಅಂದಿನ ಮೈಮರೆತಂತ ಗಳಿಗೆಗಳಲ್ಲ; ಆದರೆ ಹಿಂದಿನ ದಿನಗಳ ನೋವು, ಮುಂದಿರುವ ಅನಿರ್ದಿಷ್ಟದ ಚಿಂತೆ. ಹಾಗೆಯೇ ಸಮತೋಲನದಲ್ಲಿ ಅವಲೋಕಿಸಿದಾಗ, ನನ್ನ ಮನಸ್ಸಿನಲ್ಲಿ ಆನಂದದಕ್ಕಾಗಿ ಆಕಾಶ ಬಯಸಿದ್ದೇನಿರಬಹುದೆಂಬ ಆ ಅವಲೋಕನದ ಚಿತ್ರಣ ಇಲ್ಲಿರಬಹುದು, ನೋಡಿ ತಿಳಿಸಿ; ಆದಿ-ಅಂತ್ಯಗಳ ನಡುವೆ ತುಂಬಿ ಸಂಬಂಧ ಕಲ್ಪಿಸಿದ್ದು ಅಂತರಂಗದ ಗಂಗೆ ಹರಿದು ಮಂದಹಾಸದಲ್ಲಿ ಮನೆಮಾಡಿದಂತಿತ್ತು, ಎನ್ನುವ ಭಾವವನ್ನು ಹಿಡಿಯಲು ಮಾಡಿದ ನನ್ನ ಕಿರು ಪ್ರಯತ್ನ, ನಿಮಗೆ ಹೇಗನ್ನಿಸಿತೋ ಕೇಳುವ ಕುತೂಹಲ! ಸಹನೆಯಿಂದ ಓದಿ ಪ್ರತಿಕ್ರಿಯಿಸುವಿರೆಂದು ನಂಬಿದ್ದೇನೆ – ಗೋಪಾಲಕೃಷ್ಣ ಹೆಗ್ಡೆ)
*****************************
ನೋವಿನಲ್ಲಿ ಕೂಡಿತ್ತೆ ೨೪ರ ಇತಿಹಾಸ? ಮತ್ತೆ ನಾಡೆಲ್ಲ ನೋಡಲಿಕ್ಕಿದೆ ೨೫ರ ಪರದೆ- ೨೬ಕ್ಕೆ ಮೊದಲು ಪರದಾಟ, ನಂಬಲಾರದ ಸತ್ಯ ಗೊತ್ತಿದ್ದರೂ ಮೊದಲ ದಿವಸವೇ ಹೊಸವರುಷವನ್ನೆಲ್ಲ ಬೊಗಸೆಯಲ್ಲಿ ಬಿಗಿದಿಟ್ಟ- ಒಂದನೇ ( ಒಂದೇ) ದಿನದ ಇದು ಎಂಥಾ ವಿಪರ್ಯಾಸ-ಆಭಾಸ ಸುಗ್ಗಿ ಕೋಲಾಟ !
ಯಾಕೋ ಈ ಮೌನದಲಿ ಮೂಡಿದೆ ಮಂದಹಾಸ - ಹಾರಿರುವೆ ಗರಿಬಿಚ್ಚಿ ಅರಳಿದ ನೀ, ನನ್ನ ನೀಲಿ ಆಕಾಶದ ಆಶೆ ತೋರಿಸಿದೆ ದಿಗಂತ- ಅವಕಾಶ ಮತ್ತೆ- ಮತ್ತೆ ಹೀಗೆ ಆಶಿಸಿಸಿದೆ ನೀಲಿತುಂಬಿರಲಿ - ಶುಭ್ರ ಅಂತರಂಗ ಅದು ನಿತ್ಯಾನಂದ, ಕಾವ್ಯಾನಂದದಂತಿರಲಿ ಸದಾ ಈ ಬ್ರಹ್ಮಾಂಡ ಗುಂಡಿ ಬಂಡಿ - ಉಕ್ಕುತ್ತಿರಲಿ ಸದಾ ಚೆಂದ ತಂದ ಅದು ಬ್ರಹ್ಮಾನಂದ ಆಗಲಿ, ಆದಿ - ಅಂತ್ಯಗಳ ನಡುವೆ ತುಂಬಿ ಈ, ಅಂತರಂಗ - ಗಂಗೆ ಹರಿಯಲಿ ಹರಿದ್ವಾರ ವರ್ಷತುಂಬ 🙏💐🎊
- ಗೋಪಾಲಕೃಷ್ಣ ಹೆಗ್ಡೆ
*******************************************
ದೇವ - ದಾನವರಿಲ್ಲ, ಸಮುದ್ರಮಥನವೂ ಇಲ್ಲ; ಹಾಲಾಹಲವಂತೂ ಮೊದಲೇ ಇಲ್ಲ. ಲಕ್ಷ್ಮೀ ಚಂದ್ರರು ಇಲ್ಲ, ಧನ್ವಂತರಿಯ ಸುಳಿವಿಲ್ಲ; ಅಮೃತ ಕಲಶವದೊಂದೇ ಇರುವುದಲ್ಲ! ಕೇಳು ಜನಮೇಜಯ, ಒಳ್ಳೆಯದ ಹೊರತರಲು ಉಳಿದೆಲ್ಲ ಬೇಕಿಲ್ಲ, ಮನವದೊಂದಿದ್ದರೆ ಸಾಕಲ್ಲ!
2 thoughts on “ಕನ್ನಡ ನಾಡು, ಭಾಷೆ, ಉತ್ಸವ, ಮತ್ತು ಹೊಸವರ್ಷ …..”
ನವೀನ್ ಅವರ ವರದಿ ಸಾಹಿತ್ಯ ಸಮ್ಮೇಳನಕ್ಕೆ ಹೋಗದ ನಮ್ಮಂಥವರಿಗೆ ಉತ್ತಮ ವಿಹಂಗಮ ನೋಟ ದಕ್ಕಿಸಿತು. ಸಮ್ಮೇಳನಕ್ಕೆ ಮಾಡಿದ ವ್ಯವಸ್ಥೆಗಳು ಶ್ಲಾಘನೀಯ. ಭಾಷಣಗಳ ಹೊರತಾಗಿ ಸಾಹಿತ್ಯ ಗೋಷ್ಠಿಗಳ ಇಣುಕು ನೋಟವೂ ಇದ್ದಿದ್ದರೆ ಇನ್ನೂ ಚೆನ್ನಾಗಿರುತ್ತಿತ್ತು ಎಂಬುದು ನನ್ನ ಅಭಿಪ್ರಾಯ.
ಹೆಗಡೆಯವರ ಹೊಸ ವರ್ಷದ ಆಶಯ ಮೂರ್ತಿಸಲಿ. ಕಳೆದೆ ವರ್ಷಗಳ ಹತಾಶೆಯನ್ನೂ ಸುಂದರವಾಗಿ ಮೂಡಿಸಿದ್ದಾರೆ. ಅವರ ಕವನಗಳು ಅನಿವಾಸಿಗೆ ಬರುತ್ತಿರಲಿ.
ಅನಿವಾಸಿಯನ್ನು ಮಂಥಿಸಿ ನವೀನರ ಚೊಚ್ಚಲು ಲೇಖನ, ಅಪರೂಪದ ಹೆಗಡೆಯವರ ಕವನ ಪ್ರಕಟಿಸಿ ಕೊನೆಯಲ್ಲಿ ಚಿಕ್ಕ ಕವನ ಕೊಟ್ಟ ಸಂಪಾದಕ ಗುಡೂರರಿಗೂ ನಮನ.
ಈ ವಾರದ ಅನಿವಾಸಿ ಸಂಚಿಕೆ, ಮಹತ್ವ ಪೂರ್ಣವಾದುದು. ಬಹು ದಿನಗಳಿಂದ ಕಾಯ್ದಿದ್ದ ನವೀನ್ C ಅವರ ಮಂಡ್ಯ ಸಾಹಿತ್ಯ ಪರಿಷತ್ ಕಾರ್ಯಕ್ರಮದ ವರದಿ ಆ ಆಜಿಹೀಗುಗಳ ಬಗ್ಗೆ ವಿಸ್ತಾರವಾಗಿ ತಮ್ಮ ಅನಿಸಿಕೆಗಳನ್ನು ಬರೆದಿದ್ದಾರೆ.ವೈ ಕೆ ದಿಂದ ಇನ್ನಷ್ಟು ಪ್ರತಿನಿಧಿಗಳು ಹೋಗದಿದ್ದುದು (ಕಾರಣಾಂತರಗಳಿಂದ) ಖೇದಕರ. ನಮ್ಮ ಪ್ರತಿನಿಧಿಯಾಗಿ ಹೊಣೆ ಹೊತ್ತದ್ದಕ್ಕೆ ಧನ್ಯವಾದಗಳು. ಅದರಲ್ಲಿ ಕನ್ನಡದ ಬಗ್ಗೆ ಸರಕಾರ ಮತ್ತು ಮಸಲ್ ಪಾವರ್ ಹೊತ್ತ ಸಂಘಟನೆಗಳಿಂದ ಇನ್ನಷ್ಟು ಕೆಲಸ ಆಗಬೇಕು ಅನ್ನುವ ಧ್ವನಿ ಸ್ಪಷ್ಟವಾಗಿ ಕೇಳಬಂದಿತು.
೨) ಅದೇ ತರಹದಲ್ಲಿ ಗೋಪಾಲಕೃಷ್ಣ ಹೆಗ್ಡೆಯವರ ನಿಗೂಢ ಕವನದಲ್ಲಿ ಆಕಾಶ ಹೊತ್ತ ಆಶಯಬಗ್ಗೆ, ಅಂತರಂಗ ಗಂಗೆಯ ಬಗ್ಗೆ “ಬ್ರಹ್ಮಾನಂದ ಆಗಲಿ, ಆದಿ – ಅಂತ್ಯಗಳ ನಡುವೆ ತುಂಬಿ ಈ, ಅಂತರಂಗ – ಗಂಗೆ ಹರಿಯಲಿ ಹರಿದ್ವಾರ ವರ್ಷತುಂಬ” ಅನ್ನುವ ಹೊಸವರ್ಷದ ಸಂದೇಸಗವನ್ನು ಬೀರುತ್ತಿದ್ದಾರೆ. ಮನಃ ಶಾಸ್ತ್ರಜ್ಞರಾದದ್ದರಿಂದ ಅವರ ವಿಚಾರ ಸರಣಿಯಲ್ಲಿಯ ಒಳಾರ್ಥಗಳನ್ನು ಕಂಡು ಅರಗಿಸಿಕೊಳ್ಳುವುದು ಯಾವಾಗಲೂ ‘ಚಾಲೆಂಜ್’!
೩) ಎಲ್ಲೆನ್ ಗುಡೂರ್ ಅವರ ಮೊಂಟಾಜ್ ಚಿತ್ರ ಕವನದ ಮುಖಾಂತರ ಮನಸ್ಸನ್ನು ಒಳ್ಳೆಯದನ್ನು ಮಾಡಲು ಸಿದ್ಧವಾಗಿರಲು ಎಚ್ಚರಿಕೆಯಿತ್ತಿದ್ದಾರೆ. ಮೂವರಿಗೂ ಅಭಿನಂದನೆಗಳು. ಶ್ರೀವತ್ಸ
ನವೀನ್ ಅವರ ವರದಿ ಸಾಹಿತ್ಯ ಸಮ್ಮೇಳನಕ್ಕೆ ಹೋಗದ ನಮ್ಮಂಥವರಿಗೆ ಉತ್ತಮ ವಿಹಂಗಮ ನೋಟ ದಕ್ಕಿಸಿತು. ಸಮ್ಮೇಳನಕ್ಕೆ ಮಾಡಿದ ವ್ಯವಸ್ಥೆಗಳು ಶ್ಲಾಘನೀಯ. ಭಾಷಣಗಳ ಹೊರತಾಗಿ ಸಾಹಿತ್ಯ ಗೋಷ್ಠಿಗಳ ಇಣುಕು ನೋಟವೂ ಇದ್ದಿದ್ದರೆ ಇನ್ನೂ ಚೆನ್ನಾಗಿರುತ್ತಿತ್ತು ಎಂಬುದು ನನ್ನ ಅಭಿಪ್ರಾಯ.
ಹೆಗಡೆಯವರ ಹೊಸ ವರ್ಷದ ಆಶಯ ಮೂರ್ತಿಸಲಿ. ಕಳೆದೆ ವರ್ಷಗಳ ಹತಾಶೆಯನ್ನೂ ಸುಂದರವಾಗಿ ಮೂಡಿಸಿದ್ದಾರೆ. ಅವರ ಕವನಗಳು ಅನಿವಾಸಿಗೆ ಬರುತ್ತಿರಲಿ.
ಅನಿವಾಸಿಯನ್ನು ಮಂಥಿಸಿ ನವೀನರ ಚೊಚ್ಚಲು ಲೇಖನ, ಅಪರೂಪದ ಹೆಗಡೆಯವರ ಕವನ ಪ್ರಕಟಿಸಿ ಕೊನೆಯಲ್ಲಿ ಚಿಕ್ಕ ಕವನ ಕೊಟ್ಟ ಸಂಪಾದಕ ಗುಡೂರರಿಗೂ ನಮನ.
-ರಾಂ
LikeLike
ಈ ವಾರದ ಅನಿವಾಸಿ ಸಂಚಿಕೆ, ಮಹತ್ವ ಪೂರ್ಣವಾದುದು. ಬಹು ದಿನಗಳಿಂದ ಕಾಯ್ದಿದ್ದ ನವೀನ್ C ಅವರ ಮಂಡ್ಯ ಸಾಹಿತ್ಯ ಪರಿಷತ್ ಕಾರ್ಯಕ್ರಮದ ವರದಿ ಆ ಆಜಿಹೀಗುಗಳ ಬಗ್ಗೆ ವಿಸ್ತಾರವಾಗಿ ತಮ್ಮ ಅನಿಸಿಕೆಗಳನ್ನು ಬರೆದಿದ್ದಾರೆ.ವೈ ಕೆ ದಿಂದ ಇನ್ನಷ್ಟು ಪ್ರತಿನಿಧಿಗಳು ಹೋಗದಿದ್ದುದು (ಕಾರಣಾಂತರಗಳಿಂದ) ಖೇದಕರ. ನಮ್ಮ ಪ್ರತಿನಿಧಿಯಾಗಿ ಹೊಣೆ ಹೊತ್ತದ್ದಕ್ಕೆ ಧನ್ಯವಾದಗಳು. ಅದರಲ್ಲಿ ಕನ್ನಡದ ಬಗ್ಗೆ ಸರಕಾರ ಮತ್ತು ಮಸಲ್ ಪಾವರ್ ಹೊತ್ತ ಸಂಘಟನೆಗಳಿಂದ ಇನ್ನಷ್ಟು ಕೆಲಸ ಆಗಬೇಕು ಅನ್ನುವ ಧ್ವನಿ ಸ್ಪಷ್ಟವಾಗಿ ಕೇಳಬಂದಿತು.
೨) ಅದೇ ತರಹದಲ್ಲಿ ಗೋಪಾಲಕೃಷ್ಣ ಹೆಗ್ಡೆಯವರ ನಿಗೂಢ ಕವನದಲ್ಲಿ ಆಕಾಶ ಹೊತ್ತ ಆಶಯಬಗ್ಗೆ, ಅಂತರಂಗ ಗಂಗೆಯ ಬಗ್ಗೆ “ಬ್ರಹ್ಮಾನಂದ ಆಗಲಿ,
ಆದಿ – ಅಂತ್ಯಗಳ
ನಡುವೆ
ತುಂಬಿ ಈ,
ಅಂತರಂಗ – ಗಂಗೆ
ಹರಿಯಲಿ ಹರಿದ್ವಾರ
ವರ್ಷತುಂಬ” ಅನ್ನುವ ಹೊಸವರ್ಷದ ಸಂದೇಸಗವನ್ನು ಬೀರುತ್ತಿದ್ದಾರೆ. ಮನಃ ಶಾಸ್ತ್ರಜ್ಞರಾದದ್ದರಿಂದ ಅವರ ವಿಚಾರ ಸರಣಿಯಲ್ಲಿಯ ಒಳಾರ್ಥಗಳನ್ನು ಕಂಡು ಅರಗಿಸಿಕೊಳ್ಳುವುದು ಯಾವಾಗಲೂ ‘ಚಾಲೆಂಜ್’!
೩) ಎಲ್ಲೆನ್ ಗುಡೂರ್ ಅವರ ಮೊಂಟಾಜ್ ಚಿತ್ರ ಕವನದ ಮುಖಾಂತರ ಮನಸ್ಸನ್ನು ಒಳ್ಳೆಯದನ್ನು ಮಾಡಲು ಸಿದ್ಧವಾಗಿರಲು ಎಚ್ಚರಿಕೆಯಿತ್ತಿದ್ದಾರೆ.
ಮೂವರಿಗೂ ಅಭಿನಂದನೆಗಳು. ಶ್ರೀವತ್ಸ
LikeLike