ಅನಿವಾಸಿಗಳಾದ ನಮಗೆ ನಮ್ಮ ಜನ್ಮಭೂಮಿ ಭೇಟಿ ಮಾಡುವ ಅವಕಾಶ ಒದಗಿ, ಒಂದಷ್ಟು ದಿನ ತಾಯಿನೆಲದ ಗಾಳಿ ಬೆಳಕಿನಲ್ಲಿ ನಾವು ತೋಯ್ದು ಬರುವ ಗಳಿಗೆಗಳು ಒದಗಿ ಬಂದಾಗ ವ್ಯಕ್ತಪಡಿಸಲಾಗದ ಒಂದು ಖುಷಿ ಮನಸ್ಸನ್ನು ಆವರಿಸಿಕೊಳ್ಳುತ್ತದೆ. ಅದಕ್ಕೆ ನಾನು ಕೂಡ ಹೊರತಲ್ಲ. ನಾನು ಈ ಬಾರಿ ಭಾರತಕ್ಕೆ ಭೇಟಿ ಕೊಟ್ಟಿದ್ದು ನಾಲ್ಕು ವರ್ಷ ಒಂಬತ್ತು ತಿಂಗಳುಗಳ ಧೀರ್ಘ ಅಂತರದ ನಂತರ. ಯುಕೆ ಗೆ ಬಂದ ನಂತರ ನಾನು ಭಾರತಕ್ಕೆ ಹೋಗಿದ್ದು ಮೂರೇ ಬಾರಿ ಹೋದಾಗಲೆಲ್ಲ ಕೆಲವು ಜವಾಬ್ದಾರಿಗಳನ್ನು ಹೊತ್ತುಕೊಂಡೇ ಹೋಗಿದ್ದೆ, ತಂಗಿ ಮದುವೆ, ಮಗನ ಉಪನಯನ, ಪುಟ್ಟ ಮಗಳನ್ನು ಎತ್ತಿಕೊಂಡು ಹೀಗೆ ಏನಾದರೊಂದು ಕಾರಣಗಳಿಂದ ನನಗೆ ಬೇಕಾದೆಡೆ ಬೇಕಾದಂತೆ ನನ್ನ ರಜಾ ಕಾಲವನ್ನು ಕಳೆಯುವುದು ಸಾಧ್ಯವಾಗಿರಲಿಲ್ಲ. ಜೊತೆಗೆ ಅದು ಅಗತ್ಯ ಅಂತ ಕೂಡ ಅನಿಸಿರಲಿಲ್ಲ. ಹೋದಾಗಲೆಲ್ಲ ಅಮ್ಮನ ಕಯ್ಯಡಿಗೆ ತಿಂದು. ಅತ್ತೆಮನೆಗೆ ಹೋದಾಗ ಏಕಮೇವ ಸೊಸೆಯಾದ ಕಾರಣ ಅವರ ಇಚ್ಛೆ, ಬಯಕೆಗಳಂತೆ ಸುತ್ತಮುತ್ತಲಿನ ದೇವಸ್ಥಾನ ಸುತ್ತಿ ,ಸಂಬಂಧಿಕರ ಮನೆಗೆ ಹೋಗಿ ಅವಕಾಶ ಆದರೆ ಯಾವುದೋ ಒಂದೆರಡು ಪೂಜೆಯಲ್ಲಿ ಆರತಿ ಹಾಡು ಹೇಳಿದರೆ ನನ್ನ ಭಾರತ ಪ್ರಯಾಣ ಮುಗಿದಿರುತ್ತಿತ್ತು. ಇದಕ್ಕಿಂತ ಭಿನ್ನವಾಗಿ ನಾನು ಕೂಡ ಎಂದೂ ಯೋಚಿಸಿಯೂ ಇರಲಿಲ್ಲ.
ಆದರೆ ಈ ಬಾರಿ ಭಾರತ ಭೇಟಿ ನನ್ನ ಪಾಲಿಗೆ ಅತೀ ವಿಶೇಷ, ಕೋವಿಡ್,lockdown ಅಂತೆಲ್ಲ ಎರಡುಬಾರಿ ನನ್ನ ವಿಮಾನ ರದ್ದಾಗಿತ್ತು,ಮಕ್ಕಳ ಶಾಲೆ ,ಪತಿಯ ಉದ್ಯೋಗ ,ಇದೆಲ್ಲ ನನ್ನ ಮನಸಿಗೆ ಬಂದಾಗ ಟ್ರಿಪ್ ಪ್ಲಾನ್ ಮಾಡಲು ಸಹಕಾರಿಯಾಗಿರಲಿಲ್ಲ. ಹೀಗಾಗಿ ನಾಲ್ಕು ವರ್ಷ ಒಂಬತ್ತು ತಿಂಗಳ ನಂತರ ನಾನು ತಾಯ್ನೆಲವನ್ನು ನೋಡಲಿದ್ದೆ , ತನ್ನ ಪರಿವಾರ ಕುಟುಂಬವನ್ನು ಭೇಟಿಯಾಗಲಿದ್ದೆ. ಗೋವಿನ ಹಾಡು ಪೂರ್ಣ ಪಾಠವನ್ನ ರೆಕಾರ್ಡ್ ಮಾಡಬೇಕೆನ್ನುವ ಪೂರ್ವ ನಿಯೋಜನೆ ಬಿಟ್ಟರೆ ನಾನು ಬೇರೆ ಯಾವುದೇ ಪ್ಲಾನ್ಗಳನ್ನು ಮಾಡದೆ ಸುಮ್ಮನೆ ಹೋಗಿದ್ದೆ. ಸಮಷ್ಟಿ ತನ್ನಷ್ಟಕ್ಕೆ ತಾನೇ ನನ್ನ ೫೦ ದಿನಗಳನ್ನು ಅತ್ಯಂತ ಸುಂದರವಾಗಿ ಯೋಜಿಸಿ ಕೊಟ್ಟಿತ್ತು . ನಾನು ಖುಷಿಯನ್ನ ಆಸ್ವಾಧಿಸಲೋ ಸಮಷ್ಟಿಗೆ ಧನ್ಯವಾದ ಹೇಳಲೋ ತಿಳಿಯದಾಗಿತ್ತು . ಸಿಕ್ಕ ಗಳಿಗೆಗಳನ್ನು ನನ್ನ ಪುಟ್ಟ ಕ್ಯಾಮರಾದಲ್ಲಿ ಫ್ರೀಜ್ ಮಾಡಿ ಇಡುವುದೊಂದೇ ನನಗಿದ್ದ ಆಯ್ಕೆ ಎಷ್ಟೋ ಬಾರಿ ಅದು ಕೂಡ ಆಗಲಿಲ್ಲ. ಅನಿವಾಸಿ ಗುಂಪು ನನ್ನ ಮಟ್ಟಿಗೆ ನನ್ನ ಯುಕೆಯ ತವರುಮನಿ ಇದ್ದಂತೆ, ನನ್ನ ಪುಟ್ಟ ಪುಟ್ಟ ಪ್ರಯತ್ನಗಳನ್ನು ಶ್ಲಾಘಿಸಿ ಮತ್ತಷ್ಟು ಸಾಧನೆಗೆ, ಓದಿಗೆ ಹಚ್ಚುವ ನನ್ನ ಅತ್ಯಾಪ್ತ ಬಳಗ, ನಿಮ್ಮೆಲ್ಲರೊಂದಿಗೆ ನನ್ನ ಭಾರತ ಭೇಟಿಯ ಅತ್ಯಂತ ಖುಷಿಯ ಕೆಲ ತಾಸುಗಳ ಅನುಭವ ಹಂಚಿಕೊಳ್ಳುವ ಇಚ್ಛೆ ನನ್ನದು.
ಊರಿಗೆ ಹೋದರೆ ಧಾರವಾಡಕ್ಕೆ ಹೋಗದಿದ್ದರೆ ನನ್ನ ಪ್ರವಾಸವೇ ಅಪೂರ್ಣ,ನನ್ನ ಊರಿಂದ ಧಾರವಾಡ ೭೦ಕಿಲೋಮೀಟರ ದೂರ, ಹೀಗೆ ಮನಸು ಬಂದಾಗಲೆಲ್ಲ ಹೋಗಿ ಬರಬಹುದು.ಮತ್ತು ಧಾರವಾಡ್ ಹೋಗಲು ಯಾವುದೇ ಕಾರಣ ನೆವಗಳು,ಬೇಡ ಇದೊಂದು ರೀತಿ ಮನಸು ಬಂದಾಗ ಗುಡಿಗೆ ಹೋಗುತ್ತೀವಲ್ಲ ಹಾಗೆ. ಆದರೆ ಈ ಸಲದ ಮೊದಲ ಧಾರವಾಡದ ಭೇಟಿ ಸಾಧ್ಯ ಆಗಿದ್ದು ಪ್ರಜಾವಾಣಿಯ ೭೫ನೇ ವರ್ಷದ ಸಂಭ್ರಮಾಚರಣೆಯ ನಿಮಿತ್ತ ಏರ್ಪಡಿಸಿದ್ದ ಒಂದು ಚಂದದ ಕವಿಗೋಷ್ಠಿ, ಮತ್ತು ಸಂಗೀತ ವಿದ್ಯಾಲಯದ ಮಕ್ಕಳಿಂದ ವಿಶೇಷ ಗಾಯನ ಕಾರ್ಯಕ್ರಮ ಜೊತೆಗೆ ನನ್ನ ಗಾಯನ ಕಾರ್ಯಕ್ರಮವನ್ನೂ ಆಯೋಜಿಸಿದ್ದರಿಂದ.
ಆನಂದಕಂದರು ಬರೆದ 'ನಲ್ವಾಡಗಳು' ಕವನ ಸಂಕಲನವನ್ನು ಕೆಲವರ್ಷಗಳಿಂದ ಹುಡುಕುತ್ತಿದ್ದೆ, ಎಲ್ಲಿ ಪ್ರಯತ್ನಿಸಿದರೂ ಸಿಗಲಿಲ್ಲ. ಫೇಸಬುಕ್ ನಿಂದ ಪರಿಚಿತರಾದ ರಾಜ್ ಕುಮಾರ್ ಮಡಿವಾಳರ್ ಅವರಿಗೆ ಬೆಲ್ಫಾಸ್ಟ್ ನಲ್ಲಿ ಇರುವಾಗಲೇ ಒಂದು ಮೆಸೇಜ್ ಮಾಡಿ ಕೇಳಿದ್ದೆ ನಿಮ್ಮಲ್ಲಿ ಅಪ್ಪಿತಪ್ಪಿ ನಲ್ವಾಡುಗಳು ಸಂಕಲನ ಇದ್ದರೇ ಅದರದೊಂದು copy ಸಿಗಬಹುದೇ ? ಎಂದು. ಬಂದಾಗ ಬರ್ರಿ ಐತಿ ಕೊಡ್ತೀನಿ ಅಂದ್ರು.
ಸಪ್ತಾಪುರದಲ್ಲಿ ಇರುವ ಅವರ ಅಂಗಡಿಗೆ ಹೋಗಿ ಪುಸ್ತಕ collect ಮಾಡಲು ಹೋದವಳು ಅವರು ಹೇಳುವ ಸಾಹಿತ್ಯ ಲೋಕದ ಚಂದದ ಕಥೆಗಳನ್ನ ಕೇಳುತ್ತ,ಹಾಡುಗಳ ಬಗ್ಗೆ ಮಾತಾಡುತ್ತ ಸಮಯ ಹೋದದ್ದೇ ಗೊತ್ತಾಗಲಿಲ್ಲ. ಅವರಿಗೆ ಎಂದು ತಂದುಕೊಂಡಿದ್ದ ಬುತ್ತಿಯಲ್ಲಿ ನನಗೊಂದು ಪಾಲು ಕೊಟ್ಟು ಅವರ ಶ್ರೀಮತಿ ಸುಮಾ ಮತ್ತು ರಾಜ್ಕುಮಾರ್ ಅವರು ನನ್ನ ಜೀವ ಬಂಧುಗಳೇ ಆಗಿದ್ದರು.
ಇನ್ನೇನು ಹೊರಡಬೇಕು ಅನ್ನುವಾಗ 'ಇಲ್ಲೇ ಹಳ್ಳಿಯೊಳಗ ಒಂದು ಕನ್ನಡ ಸಾಲಿ ಐತ್ರಿ ನಿಮಗ ಆಗತದ ಅಂದ್ರ ಒಂದೈದು ನಿಮಿಷ ಹೋಗಿ ಬರೋಣ,?' ಅಂದ್ರು ನನಗೆ ಇಲ್ಲ ಅನ್ನುವ ಮನಸು ಇಚ್ಛೆ ಎರಡು ಇರಲಿಲ್ಲ. ಅವರ ಕಾಕಾನ ಕಾರಿನಲ್ಲಿ ನಾನು ಹೊರಟಿದ್ದು ಧಾರವಾಡ ಹತ್ತಿರದ ಹಳ್ಳಿ ಮುಗಧ ಕ್ಕೆ. ಹೆಸರಿನಷ್ಟೇ ಚಂದ ಊರು ಅದು. 'ಬೇಂದ್ರೆಯವರು ಮೇಘದೂತ ಬರೆಯಲು ಶುರು ಮಾಡಿದ್ದು ಇದೆ ಊರಿನ ದೇವಿ ಗುಡಿಯ ಕಟ್ಟಿ ಮ್ಯಾಲೆ' ಅನ್ನುವ ಮಾತು ಕೇಳುತ್ತಲೇ ನನಗೆ ಮಾತೆ ಹೊರಡಲಿಲ್ಲ .ಒಂದುರೀತಿಯ ಖುಷಿಯ ಗುಂಗು.
ಮುಗದದ ಶಾಲೆಯ ಅತೀ ಉತ್ಸಾಹಿ ,ಸಾಹಿತ್ಯಪ್ರೇಮಿ ಶಿಕ್ಷಕರು ನನ್ನನು ೧೦ ನೇ ತರಗತಿಯ ಮಕ್ಕಳೊಂದಿಗೆ ಮಾತಾಡಲು ತರಗತಿಗೆ ಕರೆದುಕೊಂಡು ಹೋದರು, ಮಕ್ಕಳು ಬೇಂದ್ರೆಯವರ ಎರಡು ಗೀತೆಗಳನ್ನು ಚಂದದ ರಾಗದಲ್ಲಿ ಹಾಡಿದರು. ಹಕ್ಕ್ಕಿಹಾರುತಿದೆ ನೋಡಿದಿರಾ? ಎಂಬ ಗೀತೆ ಕೇಳಿದ್ದ ನನಗೆ, ಮಕ್ಕಳು ಆ ಗೀತೆಯ ಹಿಂದೆಯೇ ಬೆಕ್ಕು ಹಾರುತಿದೆ ನೋಡಿದಿರಾ ಅಂತೇ ಅದೇ ರಾಗದಲ್ಲಿ ಹಾಡಿದಾಗ ಮತ್ತು ಈ ಗೀತೆಯು ಬೇಂದ್ರೆಯವರೇ ಬರೆದದ್ದು ಎಂದು ತಿಳಿದಾಗ ಅತೀವ ಆಶ್ಚರ್ಯವಾಯಿತು. ಮಕ್ಕಳಿಗೆ ನಾನೂ ಒಂದೆರಡು ಹಾಡು ಹೇಳಿಕೊಟ್ಟೆ. ಮಕ್ಕಳ ಮುಗ್ಧ ಪ್ರಶ್ನೆಗಳಿಗೆ ಉತ್ತರಿಸುವಾಗ , ಕೆಲವೇ ವರ್ಷಗಳ ಹಿಂದೆ ನಾನುಕೂಡ ಈ ಮಕ್ಕಳಂತೆ ಇಂಥದೇ ಶಾಲೆಯಲ್ಲಿ ಹೀಗೆ ಖುಷಿ ಖುಷಿಯಾಗಿ ಹಾಡು ಹೇಳುತ್ತಾ ಕುಳಿತಿದ್ದಿದು ನೆನಪಾಯಿತು. ಆ ಶಾಲೆಯಿಂದ ವಾಪಸ್ ಧಾರವಾದ ತಲುಪುವ ಹೊತ್ತಿಗೆ ಮನಸೆಲ್ಲ ಬೇಂದ್ರೆ , ಮೇಘದೂತ , ರಾಜಕುಮಾರ್ ಅಣ್ಣ ಹೇಳಿದ ಬೇಂದ್ರೆ ಅಜ್ಜನ ಕಥೆಗಳು. ಇಷ್ಟು ಹತ್ತಿರ ಬಂದು ಬೇಂದ್ರೆಅಜ್ಜನ ಮನೆಯ ಆವರಣಕ್ಕೆ ಒಮ್ಮೆ ಹೋಗಿ ಬರದಿದ್ದರೆ ಅಂತ ಅನ್ನಿಸಿದ್ದರೂ ಆದಿನ ಸಮಯ ಮೀರಿ ಹೋಗಿತ್ತಾದ್ದರಿಂದ ಸುಮ್ಮನೆ ಮನೆಗೆ ಮರಳಿದೆ.
ಇನ್ನೇನು ಸೂಟಿ ಮುಗೀತು ಮತ್ತ ಗಂಟುಮೂಟಿ ಕಟಗೊಂಡು ವಾಪಸ್ ಕರ್ಮಭೂಮಿಗೆ ಹೊರಡ್ಲಿಕ್ಕೆ ಬರೀ ಐದ ದಿನ ಉಳದಾವು ಅನ್ನೋ ಹೊತ್ತಿನಲ್ಲಿ ಮತ್ತೊಮ್ಮೆ ಧಾರವಾಡ ಹೋಗುವ ಗಳಿಗೆ ಕೂಡಿ ಬಂತು., ದೂರದಿಂದ ಬಂದ ಸ್ನೇಹಿತರೊಬ್ಬರಿಗೆ ಬೇಂದ್ರೆಯವರ ಮನೆ ನೋಡಬೇಕಿತ್ತು, ಬೇಂದ್ರೆ ಭವನದಲ್ಲಿ ಇದ್ದ ಸಿಬ್ಬಂದಿಯನ್ನು ಮನೆಯ ಗೇಟಿನೊಳಕ್ಕೆ ಹೋಗಲು ಅನುಮತಿ ಕೇಳಿದೆವು, ಆರಂ ಆಗಿ ಹೋಗಿ ಬರ್ರಿ , ನೀವು ಒಳಗೂ ಹೋಗಬಹುದು. ಅಲ್ಲೇ ಬೇಂದ್ರೆಯವರು ಬಳಸಿದ ವಸ್ತುಗಳು ಅದಾವು ಅದನ್ನೂ ನೋಡಿ ಬರ್ರಿ, ಆಮೇಲೆ ಅವರ ಭಾವಚಿತ್ರಗಳ ಸಂಗ್ರಹ ನೋಡ್ಲಿಕ್ಕೆ ಇಲ್ಲಿ ಬರ್ರಿ ಎಂದರು.
ನಾವು ಗೇಟಿನೊಳಗೆ ಕಾಲು ಇಟ್ಟಾಗ ಚಂದದ ಬೆಳಗು ಹಳದಿ ಗೋಡೆಯ ಮನೆಯನ್ನು ಇನ್ನೂ ಚಂದ ಮಾಡಿತ್ತು, ಅವರ ಮೊಮ್ಮೊಗಳು ಮತ್ತವರ ಪತಿ ತುಂಬಾ ಆತ್ಮೀಯವಾಗಿ ಮಾತನಾಡಿದರು, ನಾನು ಮೆತ್ತಗೆ 'ನಾನು ಹುಟ್ಟಿದ್ದು ಬೇಂದ್ರೆಯವರ ಜನ್ಮದಿನದಂದು' ಅಂದೆ. ಹಂಗಾದ್ರ ನೀವೂ ಬರೀತೀರಿ? ಅಂದ್ರು, ನಾನು `ಇಲ್ಲ ರೀ ಹಾಡ್ತೀನಿ` ಅಂದೇ, ಅದು ಹೆಂಗ ಸಾಧ್ಯ ? ಅವರ ಹುಟ್ಟಿದ ದಿನ ಹುಟ್ಟಿ ಬರೆಯಲ್ಲ ಅಂದ್ರ ? ಅಂದು ನಕ್ಕರು. ಫೋಟೋ ವಿಡಿಯೋಗ್ರಫಿ ಹುಚ್ಚು ಇರುವ, ಅದಕ್ಕಿಂತ ಹೆಚ್ಚು ಬೇಂದ್ರೆ ಅವರನ್ನು ಪ್ರೀತಿಸುವ ನನ್ನ ಸ್ನೇಹಿತರು `ನಾವು ಕೆಲ ಹಾಡುಗಳನ್ನ ರೆಕಾರ್ಡ್ ಮಾಡ್ಕೊಬಹುದಾ? ಎಂದು ಕೇಳಿದಾಗ ಬೇಂದ್ರೆ ಅಜ್ಜನ ಮೊಮ್ಮಗಳು ಅರ್ರೆ ,ಅದ್ಯಾಕ್ ಕೇಳ್ತೀರಿ ಮಾಡ್ಕೋರಿ ಅಂತ ಖುಷಿಯಿಂದ ಒಪ್ಪಿಕೊಂಡರು.
ಹಾಡುವ ಯಾವುದೇ ತಯಾರಿ ಮಾಡಿಕೊಳ್ಳದ ನಾನು ಅವರು ಹಾಡು ಅಂದ ತಕ್ಷಣ ನೆನಪಿಗೆ ಬಂದಿದ್ದು - ಇನ್ನು ಯಾಕ ಬರಲಿಲ್ಲವ್ವ ... ಕವಿತೆಯ ಸಾಲುಗಳು.
ವಾಹನಗಳ ಸದ್ದಿನ ನಡುವೆ ನಾನು ಹಾಡಿದ್ದು ಅದೆಷ್ಟು ಸರಿಯಾಗಿದೆಯೋ ಗೊತ್ತಿಲ್ಲ ,ಆದರೆ ಕನ್ನಡದ ಇಬ್ಬರು ಮೇರು ಕವಿಗಳು ವಾಸಿಸಿದ, ಓಡಾಡಿದ ಸ್ಥಳದಲ್ಲಿ ನನಗೆ ಅವರ ಹಾಡುಗಳನ್ನು ಹಾಡುವ ಅವಕಾಶ, ಅದೃಷ್ಟ ಭಗವಂತ ಒದಗಿಸಿಕೊಟ್ಟಿದ್ದಕ್ಕೆ ನಾ ಅವನಿಗೆ ಋಣಿ. (ಇಲ್ಲಿಗೆ ಬರುವ ಮೊದಲು ಮೈಸೂರಲ್ಲಿ ಕುವೆಂಪು ಅವರ ಮನೆಯ ಆವರಣದಲ್ಲಿ ಕೂತು ಸಹ ಅವರ ಒಂದು ಕವನವನ್ನು ಹಾಡಿದ್ದೆ.)
ರಜೆಯಲ್ಲಿ ದೂರದ ಅಜ್ಜಿ ಮನೆಗೆ ಹೋಗುವಾಗ ಸಿಗುತ್ತಿದ್ದ ದೇವಿಮನೆ ಘಟ್ಟ. ಅದು ನಾನು ನೋಡಿದ ಮೊದಲ ದಟ್ಟ ಅರಣ್ಯ. ಕತೆಯಲ್ಲಿ ಕೇಳುತ್ತಿದ್ದ `ಕಾಡು` ಎಂಬ ಪದದ ಕಲ್ಪನೆಗೆ ದೃಶ್ಯ ರೂಪ ಕೊಟ್ಟ ಜಾಗ ಅದು. ಜಿರ್ರ್ ಜಿರ್ರ್ ಎಂಬ ಝೇಂಕಾರ ಹಕ್ಕಿಗಳ ಸಂಗೀತ, ಕಾಡು ಹೂಗಳ ಘಮ, ಬೆಣ್ಣೆಯಂತೇ ಹರಿಯುವ ಬೆಣ್ಣೆ ಹೊಳೆ ಮತ್ತು ಅಲ್ಲಿ ನೆಲ ಕಾಣಿಸುವ ತಿಳಿನೀರು, ಎಲ್ಲೆಲ್ಲೂ ನೆರಳು, ಅದೆಲ್ಲೋ ಒಂದಷ್ಟು ಕಂಡರೂ ಕಾಣಿಸದಂತೆ ಮುಖ ಮರೆಸಿಕೊಳ್ಳುತ್ತಿದ್ದ ಬಿಸಿಲು. ಹಸಿರು ಹಸಿರು ಹಸಿರು. ಇಲ್ಲಿ ಯಾವ ದೇವಿ ಮನೆ ಮಾಡಿ ನಿಂತರೂ ಆಶ್ಚರ್ಯ ಪಡಬೇಕಿಲ್ಲ!
ಬರೀ ಬಸ್ಸಿನ ಕಿಟಕಿಯಿಂದಲೇ ಈ ದೇವಿಮನೆ ಘಟ್ಟವನ್ನ ನೋಡುತ್ತಿದ್ದ ನನಗೆ, ಇಂತಹ ಕಾಡನ್ನೊಮ್ಮೆ ಅಲೆದು ಬರಬೇಕು ಅದರ ಸನ್ನಿಧಿಯಲ್ಲಿ ಸಮಾಧಾನಿಸಬೇಕು ಎಂಬುದು ಬಾಲ್ಯದಿಂದಲೂ ಮನಸಿನಲ್ಲಿ ಘಟ್ಟಿಯಾಗುತ್ತಿದ್ದ ಕನಸು. ಭಾರತದಲ್ಲಿದ್ದಷ್ಟು ದಿನವೂ ಏನಾದರೊಂದು ಕಾರಣದಿಂದ ಅಂತಹ ಅವಕಾಶ ಕೈ ತಪ್ಪಿ ಹೋಗುತ್ತಿತ್ತು. ಗಣೇಶ ಚವತಿಗೆ ಮಂಟಪ ಸಿಂಗರಿಸಲು ಶತಾವರಿ ಗಿಡಗಳನ್ನು ಹುಡುಕಿಕೊಂಡು ಹೊಲದ ಬದುವಿನಲ್ಲಿದ್ದ ಪುಟ್ಟ ಕಾಡಿಗೆ ಹೋದಾಗ ಅಥವಾ ಮುಂಡಗೋಡ-ಯಲ್ಲಾಪುರದ ನಡುವೆ ಪ್ರಯಾಣಿಸುವಾಗಲೊಮ್ಮೆ ದೇವಿಮನೆ ಸುತ್ತುವ ಆಸೆ ಮತ್ತೆ ಮನದಲ್ಲಿ ಮೂಡುತ್ತಿತ್ತು.
ನಾನು ನಾರ್ದರ್ನ್ ಐರ್ಲೆಂಡ್ ಗೆ ಬಂದ ನಂತರ ಈ ದೇಶದಲ್ಲಿ ನನಗೆ ಅತಿಯಾಗಿ ಇಷ್ಟವಾದ ವಿಷಯವೇ ಈ ಹಸಿರು ಶುದ್ಧ ಪರಿಸರ. ಮತ್ತದನ್ನು ಸ್ವಚ್ಛವಾಗಿಡಲು ಸರ್ವ ರೀತಿಯಿಂದಲೂ ಸಹಕರಿಸುತ್ತಿದ್ದ ನಾಗರೀಕರು. ಎಲ್ಲಡೆ ಹಸಿರು ನೀರಿನ ನೀಲಿ ಕಾಣ ಸಿಗುತಿತ್ತು, ಆದರೆ ಇಲ್ಲಿ ಕಾಡು ಇರಬಹುದೇ? ಎಂಬ ಪ್ರಶ್ನೆ ಮನದಲ್ಲಿದ್ದುದು ಸುಳ್ಳಲ್ಲ. ಜುಲೈ ಅಗಸ್ಟ್ ತಿಂಗಳು ಇಲ್ಲಿ ಹೆಸರಿಗೊಂದು ಬೇಸಿಗೆ ಬರುತ್ತದೆ. ಮಕ್ಕಳಿಗೆ ರಜೆ ಇರುವ ಕಾರಣ ನಾವೆಲ್ಲರೂ ಈ ನಾಮಕಾವಾಸ್ತೆ ಬರುವ ಬೇಸಿಗೆಯಲ್ಲಿ ಸ್ಥಳೀಯ ಜಾಗೆಗಳನ್ನ ತಿರುಗಾಡುವ ಪ್ಲಾನ್ ಮಾಡ್ತೀವಿ. ಹಾಗೆ ಬೇಸಿಗೆಯ ಒಂದು ದಿನ ಇಂಟರ್ನೆಟ್ ತಡಕಾಡಿ ಹುಡುಕಿ ತೆಗೆದಿದ್ದು ''ಟೊಲಿಮೊರ್ ಪಾರ್ಕ್''ಎಂಬ ಸ್ಥಳದ ಪೋಸ್ಟ್ ಕೋಡ್. ಹತ್ತಿರ ಇತ್ತಾದ್ದರಿಂದ ಒಂದೇ ದಿನದಲ್ಲಿ ಹಿಂದಿರುಗಲು ಅನುಕೂಲ ಎಂಬ ಕಾರಣದಿಂದ ನಾವು ಅಲ್ಲಿ ಹೊರಟಿದ್ದೆವು. ಪಾರ್ಕ್ ಎಂಬುದನ್ನ ಕೇಳಿದ ಕೂಡಲೇ ಮಕ್ಕಳು ಆಡುವಂತ ಸ್ಥಳ ಅಂದುಕೊಂಡು ಮತ್ತೊಂದಿಷ್ಟು ಪೂರ್ವಾಗ್ರಹದೊಂದಿಗೆ ನಾವು ಹೊರಟಿದ್ದು ನಾರ್ದರ್ನ್ ಐರ್ಲೆಂಡನ ಟೊಲಿಮೊರ ಎಂಬ ಫಾರೆಸ್ಟ್ ಪಾರ್ಕ್ ಗೆ.
ಟೊಲಿಮೊರ ಪಾರ್ಕ್
ಕಲ್ಲಿನ ಮಾಹಾದ್ವಾರದ ಮೇಲೆ ಕೆತ್ತಿದ ೧೭೮೬ ಎಂಬುದನ್ನು ನೋಡಿಯೇ ಇದು ಬಹು ಪುರಾತನ ಐತಿಹಾಸಿಕ ಸ್ಥಳ ಎಂಬುದು ಮನದಟ್ಟಾಗಿತ್ತು. ದ್ವಾರದ ಒಳಗೆ ಹೆಜ್ಜೆ ಇಟ್ಟಂತೆ ನಾವು ಎಲ್ಲಿ ಇದ್ದೇವೆ ಅನ್ನೋದನ್ನ ಮರೆಸಿ ಬಿಡುವ ದಿವ್ಯ ಪರಿಸರ ಹಸಿರು, ತಿಳಿ ಹಸಿರು, ಕಡು ಹಸಿರು. ಗಿಳಿ ಹಸಿರು, ಕೆಂಪು ಹಸಿರು, ಹಸಿರು ಹಸಿರು. ಎದುರಿನಲ್ಲೇ ಅರಣ್ಯ ಇಲಾಖೆಯ ಪುಟ್ಟ ಕುಟೀರ ಇತ್ತು. ಅಲ್ಲಿ ಅರಣ್ಯದ ನಕ್ಷೆ ತೆಗೆದುಕೊಂಡು ನಾವು ನಡಿಗೆ ಶುರು ಮಾಡಿದೆವು. ಕೆಲವು ನಿರ್ದಿಷ್ಟ ಜಾಗೆಗಳಲ್ಲಿ ಟೆಂಟ ಮತ್ತು ಕಾರವನ್ಗಳು ಸುಮಾರು ಸಂಖ್ಯೆಯಲ್ಲಿ ಇದ್ದವು. ಅಲ್ಲೇ ಅಡುಗೆ BBQ ಗಳನ್ನ ಮಾಡಿಕೊಂಡು ಆರಾಮ ಆಗಿ ಕುಳಿತ ಜನರನ್ನ ನೋಡಿದರೆ ನಾವು ರೆಸ್ಟಿಂಗ್ zone ಗೆ ಬಂದಿದ್ದೇವೇನೋ ಅನ್ನೋ ಅನುಮಾನ. ಈ ಸ್ಥಳದ ಪ್ರತಿ ಅಂಗುಲದಲ್ಲೂ ಸಮಾಧಾನ, ನಿಧಾನ, ತಂಪು, ಕಂಪು ತುಂಬಿಕೊಂಡಿದೆ ಅನಿಸುತ್ತಿತ್ತು. ಎಷ್ಟು ಜನರಿದ್ದರು ಅಲ್ಲಿ, ಆದರೂ ಒಂಚೂರು ಗದ್ದಲವಿಲ್ಲ. ಎಲ್ಲಿ ಪ್ರಕೃತಿ ಮಾತೆಯ ಮಂಪರು ಮಾಯವಾಗುವುದೋ ಅನ್ನುವ ಆತಂಕವೇ? ಅಥವಾ ಆ ಮೌನದಲ್ಲೇ ಅವರು ಅಲ್ಲಿಯ ಆನಂದ ಸವಿಯುತ್ತಿದ್ದರೆ? ಒಟ್ಟಿನಲ್ಲಿ ಆ ದಿವ್ಯ ಮೌನ ಬಹಳ ಹಿತ ಕೊಡುತ್ತಿತ್ತು.
ಇತಿಹಾಸ
೧೬೧೧ ರಲ್ಲಿ ಮೆಗನ್ನಿಸ್ ಎಂಬ ಕುಟುಂಬದ ಒಡೆತನದಿಂದ ಇದರ ಇತಿಹಾಸ ಆರಂಭವಾಗುತ್ತದೆ. ಇದು ೧೭೮೬ ರ ತನಕವೂ ದಾಯಾದಿಗಳಲ್ಲೇ ಹಸ್ತಾಂತರ ಗೊಳ್ಳುತ್ತ ಇರುತ್ತದೆ. ಈ ಸ್ಥಳದ ಇತಿಹಾಸದ ಬಗ್ಗೆ ಓದುವಾಗ ನಾನು ಗಮನಿಸಿದ ಒಂದು ವಿಷಯವೆಂದರೆ ಯಾರೇ ಇದರ ಒಡೆತನಕ್ಕೆ ಬಂದಿರಲಿ ಒಂದೇ ಅವರು ಮದುವೆ ಆಗುವುದಿಲ್ಲ, ಆದವರಿಗೆ ಮಕ್ಕಳಾಗುವುದಿಲ್ಲ . ಆಗ ಈ ಕಾಡಿನ ಒಡೆತನ ಸೋದರಿಯ ಸಂತಾನಗಳಿಗೆ ವರ್ಗಾವಣೆ ಆಗುತ್ತದೆ ಇದು ಆ ಸ್ಥಳ ಮಹಿಮೆಯೋ ಏನೋ.
ಟೈಟಾನಿಕ್ ಹಡಗಿನ ಹೆಸರನ್ನು ಕೇಳದವರು ವಿರಳ. ಆ ಹಡಗಿನ ನಿರ್ಮಾಣಕ್ಕೆ ಕಟ್ಟಿಗೆ ಒದಗಿಸಿದ್ದು ಇದೇ ಟೋಲಿಮೋರ ಅರಣ್ಯ. ಇಲ್ಲಿದ್ದ ಒಂದು ಅರಮನೆಯಲ್ಲಿ ಎರಡನೇ ವಿಶ್ವ ಯುದ್ಧದ ಸಮಯದಲ್ಲಿ ಅಮೇರಿಕನ್ ಸೈನಿಕರು ಉಳಿದು ಕೊಂಡಿದ್ದರು, ಆದರೆ ಆ ಸುಂದರ ಕಟ್ಟಡ ಈಗ ನೆಲಸಮ ಮಾಡಲಾಗಿದೆ. ೧೯೩೦ ರಲ್ಲಿ ಅರಣ್ಯ ಇಲಾಖೆಯವರಿಗೆ ಈ ಅರಣ್ಯದ ಮೇಲ್ವಿಚಾರಣೆ ವಹಿಸಿದ ನಂತರ ನಿರಂತರ ಬೆಳವಣಿಗೆ ಕಂಡ ಇದನ್ನು ೧೯೫೫ ರಲ್ಲಿ ನಾರ್ದರ್ನ್ ಐರ್ಲೆಂಡ್ ನ ಮೊದಲ ಅರಣ್ಯ ಉದ್ಯಾನ ಎಂದು ಘೋಷಿಸಲಾಯಿತು.
ವಿಶೇಷ
ಇದು ಮೌರ್ನ ಪರ್ವತ ಶ್ರೇಣಿಯ ಒಡಲಲ್ಲಿ ಇರುವ ಅರಣ್ಯ. ಅದೇ ಕಾರಣಕ್ಕೆ ಇಲ್ಲಿಂದ ಕಾಣುವ ದೃಶ್ಯಗಳು ಪ್ರಕೃತಿ ಪ್ರಿಯರಿಗೆ ರಸದೂಟ, ಛಾಯಾಚಿತ್ರಕಾರರಿಗೆ ಸ್ವರ್ಗ ಸಮ ಅನುಭವ ನೀಡುತ್ತವೆ. ಶಿಮ್ನಾ ಮತ್ತು ಸ್ಪಿಂಕ್ವೀ ನದಿಗಳು ಈ ಅರಣ್ಯದಲ್ಲಿ ಸಂಗಮ ಗೊಳ್ಳುತ್ತವೆ ಮತ್ತು ಈ ನದಿಗಳು ಸಾಲಮನ್ ಮೀನಿನ ಆಗರಗಳು. ಕಾಡನ್ನು ಎರಡು ಭಾಗಗಳಾಗಿ ವಿಭಾಗಿಸಿದ ಈ ನದಿಗಳಿಂದಲೇ ಹುಟ್ಟಿಕೊಂಡ ಮತ್ತೊಂದು ಆಕರ್ಷಣೆ ಇಲ್ಲಿರುವ ಸೇತುವೆಗಳು. ಅರಣ್ಯದಲ್ಲಿ ಒಟ್ಟು ೧೬ ಸೇತುವೆಗಳು ಇವೆ. ಪ್ರತಿ ಸೇತುವೆಯ ಹಿಂದೊಂದು ಕಥೆಯಿದೆ. ಕೆಲವು ಕಲ್ಲಿನ ಸೇತುವೆಗಳು ಕೆಲವು ತೂಗು ಸೇತುವೆ, ಮತ್ತೆ ಕೆಲವು ಕಟ್ಟಿಗೆಯವು.
ಹರ್ಮಿಟೆಜ್ ಇದರಲ್ಲಿ ಮುಖ್ಯವಾದುದು ಈ ಸೇತುವೆಯ ಪಕ್ಕ ಒಂದು ಸುಂದರ ಕಲ್ಲಿನ ಸೂರು ಇದೆ,ಆಗ ಇಲ್ಲಿ ವಾಸಿಸುತ್ತಿದ್ದ ಜೇಮ್ಸ್ ಹಾಮಿಲ್ಟನ್ ವಿರಾಮ ಸಮಯದಲ್ಲಿ ಇಲ್ಲಿ ಮೀನು ಹಿಡಿಯಲು ಬರುತ್ತಿದ್ದರು ಮತ್ತು ಅವರ ಪತ್ನಿ ಆಕೆಯ ಸ್ನೇಹಿತೆಯರು ಈ ಕಲ್ಲಿನ ಸೂರಿನಡಿಯಲ್ಲಿ ಕಸೂತಿ ಮಾಡುತ್ತ, ಹರಟೆ ಹೊಡೆಯುತ್ತ ಪ್ರಕೃತಿ ಸೌಂದರ್ಯ ಆಸ್ವಾಧಿಸುತ್ತಿದ್ದರು. ಈ ಕಾರಣಕ್ಕೆ ಈ ಸೇತುವೆ ಈ ಕಲ್ಲಿನ ಸೂರನ್ನು ಕಟ್ಟಲಾಗಿತ್ತು ಎಂಬುದು ಈ ಸ್ಥಳದ ಇತಿಹಾಸಬಗೆಗೆ ಇರುವ ಲೇಖನಗಳು ತಿಳಿಸುತ್ತವೆ. ಒಂದೆರಡು ಕಡೆ ನದಿಯ ನಡುವೆ ಚಂದದ ಕಲ್ಲುಗಳನ್ನು ಜೋಡಿಸಿ ನೀರು ಕಡಿಮೆ ಇದ್ದ ಕಡೆ ನಡಿಗೆಯಲ್ಲೇ ನದಿಯನ್ನು ದಾಟಬಹುದಾದ ಚಂದದ ವಿನ್ಯಾಸ ಕೂಡ ಕಾಣಬಹುದು. ನಮ್ಮದು ಭಾರತೀಯ ಮನಸ್ಸು ಆ ಸುಂದರ ತಿಳಿನೀರನ್ನು ಕಂಡ ಮೇಲೆ ಕೊನೆಪಕ್ಷ ಕಾಲು ಮುಳುಗಿಸಿ ಸ್ವಲ್ಪ ಆಟ ಆಡಿ ಬರೋಣ ಅನ್ನಿಸಿತು. ನೀರಲ್ಲಿ ಕಾಲಿಟ್ಟರೆ ಅಲ್ಲೇ ಫ್ರೀಜ್ ಆಗಿ ಹೋಗುವೆನೋ ಎಂಬ ಭಾವ ಬಂದಿದ್ದು ಸುಳ್ಳಲ್ಲ. ಬಿರು ಬೇಸಿಗೆಯಲ್ಲೂ ಅಷ್ಟು ತಂಪಿತ್ತು ಆ ನೀರು
ದ್ವಾರದಿಂದಲೇ ಕಾಣುವ ಮೌರ್ನ್ ಪರ್ವತ ಶೃಂಗಗಳ ವಿಹಂಗಮ ನೋಟ, ಚಾರಣ ಮಾಡಿದರೆ ಪರ್ವತದ ತುದಿಯಿಂದ ಕಾಣುವ ಅಟ್ಲಾಂಟಿಕ್ ಸಾಗರ, ಐರಿಷ್ ಸಮದ್ರ ಸನ್ನಿಧಿ, ಪರ್ವತವೇರಿದ ಆಯಾಸವನ್ನು ತಣಿಸುತ್ತವೆ. ಕಾಡಿನ ತುಂಬಾ ಹಲವು ಅಪರೂಪದ ಜೀವವೈವಿದ್ಯಗಳಿವೆ ಕೆಂಪು ಅಳಿಲು ಅವುಗಳಲ್ಲೊಂದು.
ನಡೆದಷ್ಟು ಕಾಡು, ನೋಡಿದಷ್ಟು ನೀರು, ಮೌನದಲ್ಲಿ ಜೀಗುಟ್ಟುವ ಹಲವು ಕೀಟಗಳ ಸಂಗೀತ, ಮುಗಿಲನ್ನು ಮುಟ್ಟುವ ಓಕ್ ಮರಗಳು--ಇದು ನನ್ನ ದೇವಿ ಮನೆ. ಅದೇ ನನ್ನೆಡೆಗೆ ನಡೆದು ಬಂದಿದೆ ಅಂತ ನನಗೆ ಅನ್ನಿಸಿಬಿಟ್ಟಿತ್ತು. ಹಸಿರು, ಈ ತಂಪಲು, ಹಸಿವು ನೀರಡಿಕೆ ಎಲ್ಲವನ್ನೂ ಮರೆಸುತ್ತವೆ. ಪ್ರತಿ ಋತುವಿನಲ್ಲೂ ತನ್ನ ರೂಪವನ್ನು ಬದಲಿಸಿಕೊಳ್ಳುವ ಈ ಕಾಡು, ಒಮ್ಮೆ ಹಳದಿ ಎಲೆಗಳಿಂದ ಕೂಡಿ ಅಂದವಾದರೆ, ಮತ್ತೊಮ್ಮೆ ಚಿಗುರು ಕೆಂಪು ಸೀರೆಯುಟ್ಟು ಮಗಮಗಿಸುತ್ತದೆ. ತಿಳಿ ನೀರು ಅಲ್ಲಲ್ಲಿ ಪುಟ್ಟ ಪುಟ್ಟ ಜಲಪಾತ ನಿರ್ಮಿಸುತ್ತಾ ನಡೆಯುವ ಶಿಮ್ನಾ -ಸ್ಪಿಂಕ್ವೀ ನದಿಗಳು, ಆ ಸೀರೆಗೊಂದು ಥಳಥಳಿಸುವ ಅಂಚು ಹೊಲಿದಿದ್ದಾವೆ ಅನ್ನಿಸುತ್ತದೆ.
ಕಾಡು ಅಲೆಯಬೇಕು ಅನ್ನೋ ಎಷ್ಟೋ ವರ್ಷದ ಕನಸನ್ನು ನನಸು ಮಾಡಿದ ಶ್ರೇಯ ಈ ಟೊಲಿಮೊರ ಅರಣ್ಯಕ್ಕೆ ಸಲ್ಲುತ್ತದೆ. ಹತ್ತಿರದಲ್ಲೇ ಸೈಲೆಂಟ್ ವ್ಯಾಲಿ, ಟೈಟಾನಿಕ್ ತಯಾರಾದ ಊರು ಬೆಲ್ಫಾಸ್ಟ್, Newcastle, ಜಗತ್ತಿನ ಅಧ್ಬುತಗಳಲ್ಲಿ ಒಂದಾದ Giant's causeway ಗಳಿವೆ.
ನಾನು ಈ ಸ್ಥಳವನ್ನು ಮೊದಲಬಾರಿ ನೋಡಿದ್ದು ೨೦೧೧ ರಲ್ಲಿ. ಆ ನಂತರ ಲೆಕ್ಕವಿಲ್ಲದಷ್ಟು ಬಾರಿ ಭೇಟಿ ನೀಡಿದ್ದೇನೆ, ಎಷ್ಟೋ ಸಲ ದಾರಿ ತಪ್ಪಿ ಕಳೆದು ಹೋಗಿದ್ದೇನೆ, ನೀರಿನಲ್ಲಿ ಕಾಗದದ ದೋಣಿ ಬಿಟ್ಟು ಮಕ್ಕಳೊಂದಿಗೆ ಆಟವಾಡಿದ್ದೇನೆ. ಪ್ರತಿಬಾರಿಯೂ ಮತ್ತೆ ಹೋಗಬೇಕು ಅನ್ನುವ ಆಸೆಯೊಂದಿಗೆ ಮರಳುತ್ತೇನೆ. ಈ ವರ್ಷದ ಬೇಸಿಗೆಯಲ್ಲಿ ಭೇಟಿ ಕೊಟ್ಟಾಗ ಒಂದು ರಾಶಿ ಕಾಡು ಬೆಳ್ಳುಳ್ಳಿ ಸೊಪ್ಪು ಕಿತ್ತುಕೊಂಡು ಬಂದು ಒಳ್ಳೆಯ ಅಕ್ಕಿರೊಟ್ಟಿ, ಪಲ್ಯ,ಚಟ್ನಿ ಮಾಡಿ ಸವಿದಿದ್ದೆ. ಈಗ Autumn ಬಣ್ಣಗಳನ್ನ ನೋಡಲು ಹೋಗಬೇಕು.
ನೀವು Northern Ireland ಗೆ ಭೆಟ್ಟಿ ಕೊಟ್ಟರೆ ಈ ಕಾಡನ್ನ ನೋಡೋದು ಮರೆಯಬೇಡಿ.
ಫೋಟೋಗಳು ಮತ್ತು ಲೇಖನ :-ಅಮಿತಾ ರವಿಕಿರಣ