ಹೀಗೊಂದು (ಹಾಳು) ಹರಟೆ

ನಮಸ್ಕಾರ ಅನಿವಾಸಿ ಬಂಧುಗಳಿಗೆ. ತಮಗೆಲ್ಲ  ಅಕ್ಷಯತೃತೀಯಾ ಹಾಗೂ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು.
‘ಭಕ್ತಿ ಇಲ್ಲದ ಬಡವನು ನಾನಯ್ಯ
ಕಕ್ಕಯ್ಯನ ಮನೆಯಲೂ ಬೇಡಿದೆ,
ದಾಸಯ್ಯನ ಮನೆಯಲೂ ಬೇಡಿದೆ,
ಚೆನ್ನಯ್ಯನ ಮನೆಯಲೂ ಬೇಡಿದೆ,
ಎಲ್ಲ ಪುರಾತನರು ನೆರೆದು
ಭಕ್ತಿ ಭಿಕ್ಷವನಿಕ್ಕಿದರೆ ಎನ್ನ ಪಾತ್ರೆ ತುಂಬಿತ್ತು
ಕೂಡಲ ಸಂಗಮದೇವಾ’.
ವಚನದಲ್ಲಿ ನಾಮಾಮೃತ ತುಂಬಿದ ಬಸವಣ್ಣನವರನ್ನು ತುಂಬು ಮನದಿಂದ ನೆನೆಯೋಣ. ಲೋಕದ ಡೊಂಕ ತಿದ್ದುವ ಉಸಾಬರಿ ಬಿಟ್ಟು ನಮ್ಮ ನಮ್ಮ ತನುವ- ಮನವ ಸಂತೈಸಿಕೊಂಡು , ಇವನಾರವ ಎನ್ನದೇ ಇವ ನಮ್ಮವ ಎಂದು ಜಗವನಪ್ಪಿಕೊಂಡು ಜಗದೀಶನಿಗೆ ಪ್ರಿಯರಾಗೋಣ. ಏನಂತೀರಿ?
ಇಂದಿನ ಓದಿಗಾಗಿ ಹಳೆಯ ಹರಟೆಯೊಂದನ್ನು ನಾನು ಹಂಚಿಕೊಳ್ಳುತ್ತಿರುವೆ. ಓದಿ ನಿಮ್ಮ ಅನಿಸಿಕೆಗಳನ್ನು ನೀವು ಹಂಚಿಕೊಳ್ಳಿ.

~ ಸಂಪಾದಕಿ

ಆಕಳಿಕೆ – ತೂಕಡಿಕೆ

‘ಸಮಯಾ ಸಮಯವುಂಟೇ ಭಕ್ತವತ್ಸಲ ನಿನಗೆ’ಅಂತ ಕನಕದಾಸರು ಹಾಡಿದ್ಹಂಗ ಈ ಆಕಳಿಕಿಗೆ ಸಮಯಾಸಮಯ ಅಂತ ಏನೂ ಇಲ್ಲ...ಕಾರ್ಯಕಾರಣ ಸಂಬಂಧವೂ ಇಲ್ಲ.ಎಲ್ಲೆ ಬೇಕಾದರೂ ಯಾವಾಗ ಬೇಕಾದ್ರೂ ಬಂದಬಿಡತಾವ;ಮಾನ ಕಳೆದುಬಿಡತಾವ.ಯಾವುದರೇ ಕಾರ್ಯಕ್ರಮದಾಗ ಭಾಷಣಕಾರರು ಗಂಭೀರವಾಗಿ ವಿಷಯ ಮಂಡಸೂ ಮುಂದ ಮುಂದಿನ ಸೀಟಿನಾಗ ವಕ್ಕರಿಸಿದ ನೀವು  ‘ಆsss’ಅಂತ ಆಕಳಿಸಿ ಬಾಯಾಗs ವಿಶ್ವರೂಪ ತೋರಿಸಿದ್ರ ಎದುರಿಗಿನವರು ಕಕ್ಕಾಬಿಕ್ಕಿ ಆಗಿಬಿಡತಾರರೀ..ಕ್ಲಾಸ್ ರೂಮ್ ನಾಗ ಟೀಚರ್ ಏನೋ ಗಹನವಾದ ವಿಷಯವನ್ನು ನಿಮ್ಮ ತಲೆಬುರುಡಿನಾಗ ತುಂಬಲಿಕ್ಕೆ ಅಂತ ಹರಸಾಹಸ ಮಾಡಕೋತ ಹೆಣಗಾಡತಿರಬೇಕಾದ್ರ ನೀವು’ಆsss’ ಅಂತ ಆಕಳಿಸಿದ್ರ ಅವರ ಸಿಟ್ಟು ನೆತ್ತಿಗೇರಿ ನಿಮ್ಮನ್ನು ಸ್ಟ್ಯಾಂಡ್ ಅಪ್ ಆನ್ ದ ಬೆಂಚೋ ಇಲ್ಲ ಗೆಟ್ ಔಟ್‌ ಫ್ರಾಮ್ ಮೈಕ್ಲಾಸೋ ಖಂಡಿತ ಮಾಡಿಬಿಡತಾರರೀ. ಇನ್ನ ಕೆಲವೊಮ್ಮೆ ವಯಸ್ಸಾದ ಹಿರಿಯರು ನೀವು ಮಾತಿಗೆ ಸಿಕ್ಕದ್ದೇ ತಡ ತಮ್ಮ ಪುರಾನಾ ಜಮಾನಾದ ಪುರಾಣದ ಕಂತಿ ಬಿಚ್ಚಿದ್ರು ಅಂದ್ರ...ನಿಮ್ಮೂ ಶುರುವಾಗತಾವ ಆಕಳಿಕಿ ಸಾಲಾಗಿ.ಆದ್ರ ಪಾಪ! ಕೆಲವೊಬ್ಬರಂತೂ ಅವನ್ನ ಸಂಪೂಣ೯ ದಿವ್ಯನಿಲ೯ಕ್ಷ್ಯ ಮಾಡಿ ತಮ್ಮ ಕಥಿ ಹಂಗೇ ಮುಂದುವರೆಸಿರತಾರ ಅನ್ರಿ..ನೀವೋ ಆಕಳಿಸಿ ಆಕಳಿಸಿ ಬಾಯಿನೋವು ಬಂದು ಕಣ್ಣೀರು ಕಪಾಳಕ್ಕ ಹರಿಸಿ ದಣಿಯುತ್ತೀರಿ.ಮತ್ತ ಯಾವಾಗರೇ ಯಾರದರೇ  ಪರಿಚಿತರ ಮನಿಗೆ ಹೋಗಿರತೀರಿ ಅಂತಿಟ್ಟುಕೋರಿ.ಅವರ ಮನ್ಯಾಗ ಆಗಷ್ಟೇ  ಮಗಂದೋ ,ಮಗಳದೋ ಮದುವಿ ಆಗಿರತದ..ಮದುವಿ ಫರಾಳ ತಿನ್ನಲಿಕ್ಕೆ ಕೊಡದಿದ್ದರೂ ಸರಿ ಮದುವಿ ಆಲ್ಬಂ- ವಿಡಿಯೋ ತಪ್ಪಲಾರದ ತೋರಸತಾರ.ಆ ಹುಡುಗನೋ ಹುಡುಗಿನೋ ಬಿಟ್ರ ನಿಮಗ ಯಾರೂ ಗೊತ್ತಿರಂಗಿಲ್ಲ..ಆದ್ರೂ ಮೂರಮೂರ ತಾಸು ಕೂತ ಅದನ್ನ ನೋಡ ಅಂದ್ರ ಆಕಳಿಕಿ ಬರದ s ಬಿಟ್ಟಾವ?!
ಹೀಂಗ ಆಕಳಿಸೋದು ಸಭ್ಯತೆ ಅಲ್ಲ ಅಂತ ನಾನೂ ಒಪ್ಪಗೋತಿನಿ.ಆದ್ರ ಅವುಗಳ ನಿಯಂತ್ರಣ ನಮ್ಮಕೈಯಾಗ ಇಲ್ಲ ಅಲ್ರೀ.ತಮ್ಮ ಮನಸ ಬಂದಾಗ ಹಿಂದಮುಂದ ಏನೂ ಸೂಚನೆ ಕೊಡದ ಧಬಕ್ ಅಂತ ಬಂದಿಳಿಯೋ ಅತಿಥಿಗಳಗತೆ ನುಗ್ಗಿ ಬಂದ್ರ ಅದರಾಗ ನಮ್ಮ ತಪ್ಪೇನದ ಅಲ್ಲೇನ್ರಿ? ಇದೆಲ್ಲ ಎಲ್ಲಾರಿಗೂ ಗೊತ್ತಿದ್ರೂ ನಾವು ಮಾತಾಡೂಮುಂದ ಎದುರಿಗಿನವರು ಆಕಳಿಸಿದ್ರ ನಮ್ಮ ಕಣ್ಣು ಕೆಂಪಾಗೋದಂತೂ ಗ್ಯಾರಂಟಿ .ಎಷ್ಟೋ ಸಲ ನಾನೇ ನನ್ನ ಮಕ್ಕಳಿಗೆ ಬಯ್ಯತಿರತೀನಿ...’ನಾನಿಲ್ಲೆ ಗಂಟಲ ಒಣಗಿಸಿಕೊಂಡು ,ತಲಿ ಕೆಡಿಸಿಕೊಂಡು ಇಷ್ಟ ಸೀರಿಯಸ್ಸಾಗಿ ಏನೋ ಹೇಳಲಿಕ್ಹತ್ತೀನಿ..ನೀವು ಆಕಳಿಸಕೋತ ಹೆಂಗ ಕೂತೀರಿ ನೋಡ್ರಿ ನಿಲ೯ಜ್ಜರ ಹಂಗ ‘ಅಂತ.
ಕಳೆದ ಸಲ ವಲ್ಡ್೯ ಕಪ್ ಮ್ಯಾಚ್ ನಡದಾಗ ಪಾಕಿಸ್ತಾನದ ಕ್ರಿಕೆಟ್ ಟೀಮಿನ ಕಪ್ತಾನ್ ಸರಫರಾಜ್ ಆಕಳಿಸಕೋತ ಕೂತಿದ್ದು ಒಂದು ಬ್ರೇಕಿಂಗ್ ನ್ಯೂಸೇ ಆಗಿಬಿಟ್ಟಿತ್ತಲಾ....ಪಾಪ! ಅವರೂ ಮನಷಾರೇ.ಇಷ್ಟೆಲ್ಲಾ ಹಗಲೂ ರಾತ್ರಿ ಪ್ರಾಕ್ಟೀಸ್ ಮಾಡಿ ಆಡೂಮುಂದಾಗ ಸೋಲೂ ಹಂತದಾಗ ಬ್ಯಾಸರಕೀಲೇ ಒಂದು ಆಕಳಿಸೋ ಸ್ವಾತಂತ್ರ್ಯನೂ ಅವರಿಗಿಲ್ಲ ಅಂದ್ರ ಹೆಂಗರೀ?
ಇನ್ನ ಆಫೀಸಿನಾಗ ಬಾಸ್ ಏನರೇ ಲೆಕ್ಚರ್ ಕೊಡೂಮುಂದ ಆಕಳಿಸಿದ್ರೋ ಮುಗೀತು.ನಿಮ್ಮ ಭತ್ಯೆ ಕಟ್ ಅಂತನೇ ಲೆಖ್ಖ.ಮುಂದ ನಿಮಗ್ಯಾವ ಸಿ.ಎಲ್.ಸ್ಯಾಂಕ್ಷನ್ ಆಗಂಗಿಲ್ರಿ.ನಿಮ್ಮ ಆಕಳಿಕೆ ಸೀದಾ ಅವನ ಅಹಂನ್ನೇ ನುಂಗಿಬಿಟ್ಟಿರತದ.ಅದಕ್ಕಽ ಎಚ್ಚರಿಕೆಲೆ ಇರಬೇಕು.ಆದ್ರ ಮಜಾ ಅಂದ್ರ ಯಾವಾಗ ನೀವು ಎಚ್ಚರಕಿಲೇ ಇರಬೇಕು ಅನಕೋತಿರೋ ಅವಾಗೇ ಇವುಗಳ ಹಾವಳಿ ಭಾಳ ಇರತದ.ಬೆಳತನಕಾ ದೋಸ್ತ್ ರ ಜೋಡಿ ಹರಟಿ ಹೊಡಿಯೂಮುಂದ ,ರಾತ್ರೆಲ್ಲ ನಿದ್ದಿಗೆಟ್ಟು ಓಣ್ಯೋಣಿ ತಿರಗೂಮುಂದ,ಟಿವಿ ಮುಂದ ಕೂತು ಸುಟ್ಟು ಸುಡುಗಾಡು ಸಿನೆಮಾ ನೋಡೂಮುಂದ,ಮೊಬೈಲ್ ನಾಗ ಕ್ಯಾಂಡಿಕ್ರಷ್ ,ಪಬ್ಜಿ ಆಡೂಮುಂದ ತಪ್ಪಿನೂ ಒಂದರೇಽ ಆಕಳಿಕಿ ಬಂದ್ರ ಕೇಳ್ರಿ.
ಸೂರ್ಯೋದಯಕ್ಕ ಮುಂಚೆ ಅರುಣನ ಆಗಮನ ಆಗೂಹಂಗ ನಿದ್ದಿ ಬರೂದರ ಮುನ್ಸೂಚನೆ ಈ ಆಕಳಿಕೆಗಳು ಅನ್ನಬಹುದು.ಆದ್ರ ಇದಕ್ಕ ತೀರ ವಿರುದ್ಧವಾಗಿ ಒಂದೊಂದುಸಲ ಮಧ್ಯಾಹ್ನಮೂರಮೂರು ತಾಸು ಮಲಕೊಂಡು ಎದ್ದಮ್ಯಾಲೂ ಒಂದರಹಿಂದ ಒಂದು ಹಂಗೇ ಸಾಲುಹಿಡದು ಬರತಿರತಾವ.ಕೆಲವೊಮ್ಮೆ ಬ್ಯಾಸರ ಆಗಿದ್ರನೂ ಬರತಾವ.ಕೆಲವೊಮ್ಮೆ ವಿಪರೀತ ದಣಿದಾಗ,ದೇಹ ಬಳಲಿದಾಗ ಬಂದ್ರ ಕೆಲವೊಮ್ಮೆ ಏನೂ ಕೆಲಸ ಇಲ್ಲದಽ ಸೋಮಾರಿಗಳಾಗಿ ಸೋಫಾದ ಮ್ಯಾಲೆ ಮೈ ಚೆಲ್ಲಿದಾಗನೂ ಬರತಾವ...ಅತೀ ಬ್ಯಾಸಗ್ಯಾಗ..ಅತೀ ಥಂಡ್ಯಾಗ....ಹೀಂಗs ಅಂತ ಹೇಳಲಿಕ್ಕೆ ಬರಂಗಿಲ್ರಿ .
ಯಾರರೇ ಪ್ರೀತಿಪಾತ್ರರು ಭೆಟ್ಟಿ ಆಗಿ ವಾಪಸ್ ಹೋದಾಗನೂ ಹೀಂಗಽ ಆಕಳಿಕಿ ಬರತಾವ.ಮೈತುಂಬ ,ಮನಿತುಂಬ ಕೆಲಸ ನೋಡಿ ತಲಿ ದಿಮ್ ಅಂದನೂ ಆಕಳಿಕಿ ಬರತಾವ.ಕೆಲವೊಮ್ಮೆ ಸುಮ್ಮೇ ನಮ್ಮ ಬಾಜೂಕಿನವರು ಆಕಳಿಸತಾರ ಅಂತ ನಮಗೂ ಆಕಳಿಕಿ ಬರತಾವ.ಇನ್ನ ಕೆಲವೊಮ್ಮೆ ಶಾಸ್ತ್ರೀಯ ಸಂಗೀತ ಕಾರ್ಯಕ್ರಮದಾಗ ,ಹರಿದಾಸರ ಹರಿಕಥಿಯೊಳಗ,ಸತ್ಯನಾರಾಯಣ ಕಥಿ ಅಂತಹ ದೀರ್ಘ ಪೂಜಾಕಥಿಗಳನ್ನು ಕೇಳೂಮುಂದ ಎಲ್ಲಿರತಾವೋ ಏನೋ ಓಡೋಡಿ ಬರತಾವ.ಅದಕ್ಕಽ ಅಂಥಾ ಕಾರ್ಯಕ್ರಮದಾಗೆಲ್ಲ ನಾ ಆದಷ್ಟು ಹಿಂದಿನ ಸೀಟೇ ಪ್ರಿಫರ್ ಮಾಡತೀನ್ರಿ.ನಂಗ ಈ ಪೂಜಾವಿಧಿಗಳೆಲ್ಲ ಝಟ್ ಪಟ್ ಅಂತ ಮುಗದ್ರ ಭಾಳ ಭಕ್ತಿ,ಏಕಾಗ್ರತೆ ಎಲ್ಲಾ ಇರತದರಿ.ಅದೇನರೆ ಅಧ೯ತಾಸಕಿಂತ ಜಾಸ್ತಿ ಇತ್ತೋ ....ಆಕಳಿಕಿ ಶುರುನೇ.ಸತ್ಯನಾರಾಯಣ ಪೂಜಾದ ಆ ಕಲಾವತಿ – ಲೀಲಾವತಿ ಕಥಿ ಕೇಳಕೋತ ಆಕಳಿಕಿ ಬಂದ್ರ ಒಳಗೊಳಗೇ ಪುಕಪುಕ ಆಗತಿರತದ್ರಿ.’ನನ್ನ ಕಥಿ ಕೇಳೂಮುಂದ ಆಕಳಿಸಿ ನನಗ ಅಪಮಾನ ಮಾಡಿದಿ’ ಅಂತ ಸತ್ಯನಾರಾಯಣ ಎಲ್ಲರೇಽ ಸಿಟ್ಟಿಗೆದ್ದು ಹಡಗಿನಲ್ಲಿದ್ದ ಧನಕನಕಗಳನ್ನು ಎಲಿ-ತೊಪ್ಪಲು-ಕಲ್ಲುಗಳನ್ನಾಗಿ ಪರಿವತ೯ನೆ ಮಾಡಿದ್ಹಂಗ ಇರೋ ಒಂದೆರಡು ನನ್ನ ಬಂಗಾರದೊಡವೆಗಳನ್ನುಹಿತ್ತಾಳೆಯನ್ನಾಗಿ,ಇರೋ ಒಂದೆರಡು ರೇಶ್ಮೆಸೀರೆಗಳನ್ನು ಹಳೆಯ ಹರಿದ ಸೀರೆಗಳನ್ನಾಗಿ ಮಾಡಿಬಿಟ್ಟ್ರ.....ಅಂತ ಗಾಭರಿ ಆಗತಿರತದ.ಆದ್ರ ಆ ಗಾಭರಿಗೆ ಇನ್ನೊಂದೆರಡು ಆಕಳಿಕೆ ಹೆಚ್ಚಿಗೆ ಬರತಾವು ನೋಡ್ರಿ...

ನಿಮಗೊಂದು ಮಜಾ ಸುದ್ದಿ ಗೊತ್ತೇನ್ರಿ? ತಾಯಿ ಗಭ೯ದಾಗಿರೋ ಮಗು ಸಹಿತ ಆಕಳಸತದಂತ.ವೈದ್ಯಕೀಯ ಶಾಸ್ತ್ರದ ಪ್ರಕಾರ ಅದು ಮೆದುಳಿನ ಒಳ್ಳೆಯ ಬೆಳವಣಿಗೆಯ ಲಕ್ಷಣ ಅಂತ.ಈ ಆಕಳಿಸೋ ಪ್ರಕ್ರಿಯೆ ಬರೇ ನಮ್ಮ ಮನುಷ್ಯ ಜಾತಿಯೊಳಗ ಅಲ್ರೀ...ಭಾಳಷ್ಟು ಪ್ರಾಣಿಗಳೊಳಗೂ ಅದ ಅಂತ.
ಇನ್ನ ಈ ಆಕಳಿಕೆಗಳಿಗೂ ಮತ್ತ ಪರೀಕ್ಷಾಗೂ ನೇರಾನೇರ ಸಂಬಂಧ ಅದನೋಡ್ರಿ.ಪರೀಕ್ಷಾ ಟೈಮದಾಗ ಕೈಯಾಗ ಪುಸ್ತಕ ಹಿಡದ್ರ ಸಾಕು ಆಕಳಿಕಿ ಶುರು..ನಂಗಂತೂ ಗಣಿತದ ಪ್ರಶ್ನೆಪತ್ರಿಕೆ ನೋಡಿದರ ಸಾಕು..ಅದರಾಗ ಎಷ್ಟು ಲೆಖ್ಖ ಮಾಡಲಿಕ್ಕೆ ಕೊಟ್ಟಾರೋ ಅದರ ದುಪ್ಪಟ್ಟು ಆಕಳಿಕೆ ಬರೂವರೀ.
ನಿಮಗೆಲ್ಲ ರಾಮಾಯಣದ ಕಥಿ ಗೊತ್ತೇ ಇರತದ.ಅದರಾಗ ನಮ್ಮಹನುಮಂತ ಲಂಕಾಪ್ರವೇಶ ಮಾಡೂಮುಂದ ಸುರಸಾ ಎಂಬ ರಕ್ಕಸಿಯ ಕಥಿ ಬರತದ.ನನ್ನ ಬಾಯಲ್ಲಿ ಪ್ರವೇಶಿಸಿ ಹೊರಬಂದರೆ ಮಾತ್ರ ನಿನಗೆ ಲಂಕಾಪ್ರವೇಶ ಅಂತ ಹೇಳಿದ ಅಕಿ ಆ ಅಂತ ಆಕಳಿಸತಾಳ.ಹನುಮ ತನ್ನ ಗಾತ್ರವನ್ನುಬೃಹದಾಕಾರವಾಗಿ ಬೆಳೆಸತಾನ.ಅದಕ್ಕ ತಕ್ಕಂಗ ‘ಆ’ಅಂತ ಬಾಯಿ ಅಗಲಿಸಿದ ಅಕಿನ ಬಾಯೊಳಗೆ ಹೋದ ಹನುಮ ತಕ್ಷಣವೇ ಪೂತಿ೯ ಸಣ್ಣವನಾಗಿ ಅಕಿ ಬಾಯಿ ಮುಚ್ಚುವುದರೊಳಗಾಗಿ ಹೊರಬಂದುಬಿಡುವ ಕಥಿ ಭಾಳ ಸ್ವಾರಸ್ಯಕರವಾಗೇದ.ಅಂದ್ರ ಜೀವನ-ಮೃತ್ಯುಗಳೆರಡೂ ಒಂದು ಆಕಳಕಿ ಅಳತೀ ಒಳಗಽ ಅವ ಅನ್ನೂ ತತ್ವ ನಮಗ ಅಥ೯ ಆಗತದ.
ಆಕಳಿಕಿ ಸುದ್ದಿ ಆತು..ಇನ್ನ ತೂಕಡಿಕಿ ಸುದ್ದಿನೂ ಒಂಚೂರು ಮಾತಾಡೇ ಬಿಡೂಣು.ಇವೆರಡೂ ಒಂಥರಾ ಅವಳಿ ಸೋದರರು ಇದ್ಹಂಗ. ಈ ತೂಕಡಿಕಿನೂ ಅಷ್ಟೇ ...ಯಾವ ಮಾಯದಾಗ ಬರತದೋ ಗೊತ್ತೇ ಆಗಂಗಿಲ್ಲರೀ.ಒಂಥರಾ ಗಾಢನಿದ್ದೆನೂ ಅಲ್ಲದ,ಎಚ್ಚರಿಕೆನೂ ಅಲ್ಲದ ಈ ತೂಕಡಿಕಿ ಮಜಾ ಅನುಭವಿಸಿದವರಿಗೇ ಗೊತ್ತು..ಎಷ್ಟೋ ಸಲ ಸಂತ್ಯಾಗ ತೂಕಡಿಸೋ ಮಂದಿನೂ ಇರತಾರ.ಕೆಲವು ಸಲ ನಮ್ಮ ಮನ್ಯಾಗ ಟಿವಿ ಜೋರ್ ದನಿ ತಗದು ಒದರತಿರತದ್ರಿ.ಅಡಿಗಿ ಮನ್ಯಾಗ ನನ್ನ ಮಿಕ್ಸಿ,ಕುಕ್ಕರ್ ಸೀಟಿ ಧಾಂಧಲೆ ನಡದಿರತದ.ನನ್ನ ಅವಳಿ ಮಕ್ಕಳದು ಯಾವುದೋ ಸಣ್ಣ ವಿಷಯಕ್ಕೆ ಜೋರ ಜಗಳ ನಡದಿರತದ.ಆದ್ರ ನಮ್ಮ ಮನಿಯವರು ಹಂಗಽ ಸೋಫಾಕ್ಕೊರಗಿ ತೂಕಡಿಸತಿರತಾರ. ಕೆಲವೊಬ್ಬರಿಗೆ ಈ ಗದ್ದಲದ ಬ್ಯಾಗ್ರೌಂಡ್ ನಾಗ ಭಾಳ ಛಂದ ನಿದ್ದಿ ಬರತದರಿ....ಪುಷ್ಪಕ ವಿಮಾನದ ಕಮಲಹಾಸನಗತೆ.ಈ ಬಸ್ಸು-ಟ್ರೇನುಗಳ ಪ್ರವಾಸ ಅಂತೂ ತೂಕಡಿಕೆಯ ತವರು ಎನ್ನಬಹುದು.ನಾ ಅಂತೂ ಎಷ್ಟೋ ಸಲ ಸಿಟಿ ಬಸ್ ನಾಗೂ ತೂಕಡಿಸಕೋತ ಓಡಾಡಿ ಎರಡೆರಡು ಸ್ಟಾಪ್ ದಾಟಿ ಇಳಿದ ಪ್ರಸಂಗಗಳೂ ಭಾಳ ಅವರೀ.ಎಷ್ಟೋ ಸಲ ನಮ್ಮ ಬಾಜೂಕ ಕೂತವರು ತೂಕಡಿಸಕೋತ ನಮ್ಮ ಮೈಮ್ಯಾಲ ತಮ್ಮ ಭಾರ ಹಾಕಿ ,ಎಷ್ಟೋ ಸಲ ನಾವು ತೂಕಡಿಸಕೋತ ಅವರ ಮ್ಯಾಲೆ ಜೋಲಿ ಹೊಡೆದು ಭಯಂಕರ ಮುಜುಗರದ ಪ್ರಸಂಗಗಳನ್ನೂ ಅನುಭವಿಸುವುದಾಗತದ.ಇನ್ನಽ ಎಷ್ಟೋ ಬಾಲಿವುಡ್ ಮೂವಿಗಳೊಳಗ ಹೀಂಗಽ ಬಸ್ ನಾಗ ತೂಕಡಿಸಿ ಹಿರೋನ ಹೆಗಲ ಮೇಲೆ ತಲೆಯಿಡೋ ಹಿರೋಯಿನ್ ,ಅವಳ ಹಾರಾಡುತ್ತಿರೋ ಮುಂಗುರುಳನ್ನು ನೇವರಿಸೋ ಹಿರೋ ..ಹಿನ್ನೆಲೆಯಲ್ಲಿ ಒಂದು ಹಾಡು...ಲವ್ ಸ್ಟೋರಿಗೆ ನಾಂದಿ ಆಗಿಬಿಡತದ್ರಿ ಈ ತೂಕಡಿಕಿ.
ಆದ್ರ ಎಷ್ಟೋ ಸಲ ಈ ತೂಕಡಿಕಿಯಿಂದ ಅವಘಡಗಳೂ ಆಗತಾವ.ರಾತ್ರಿ ಬಸ್ ಡ್ರೈವ್ ಮಾಡುತ್ತಿರುವ ಡ್ರೈವರ್ ತೂಕಡಿಸಿದರ ಮುಗೀತು..ಲಕ್ಷ್ಮಿ ರಮಣ ಗೋವಿಂದ..ನೈಟ್ ಡ್ಯೂಟಿ ಮಾಡುವ ನಸ್೯ ಡಾಕ್ಟರ್ ತೂಕಡಿಸಿದ್ರ ಪೇಶಂಟ್ ಗಳ ಗತಿ ಅಧೋಗತಿ.ತೂಕಡಿಸುತ್ತ ಮಗುವಿಗೆ ಹಾಲೂಡಿಸಿದ ತಾಯಿ...ಉಸಿರುಗಟ್ಟಿದ ಮಗು ಇಂಥವೆಲ್ಲ ಸುದ್ದಿಗಳನ್ನು ಆಗಾಗ ಕೇಳಕೋತನ ಇರತೀವಿ.ತೂಕಡಿಸಿಕೋತ ಕೂತ ಸೆಕ್ಯೂರಿಟಿ ಗಾಡ್೯ಗಳ ಮುಂದೆನೇ ಮನೆ ,ATM ಗಳ ಕಳ್ಳತನಗಳೂ ನಡೆಯುವುದುಂಟು.
ತೂಕಡಿಕಿ ಮಾತು ಬಂದಾಗ ನಮ್ಮ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಮರೆಯುವ ಹಾಗೆಯೇ ಇಲ್ಲ.ಸಭೆ -ಸಮಾರಂಭಗಳಲ್ಲಿ ,ಸದನದ ಕಲಾಪಗಳಲ್ಲಿ ಅವರು ತೂಕಡಿಸಿ ಸುದ್ದಿಯಾಗುವುದು ಸವೇ೯ಸಾಮಾನ್ಯವಾಗಿತ್ತು.ಅದಕ್ಕಽ ಬಲ್ಲವರು ‘ತೂಕಡಿಸಿ ತೂಕಡಿಸಿ ಬೀಳದಿರೋ ತಮ್ಮಾ ...ಓ ಮಂಕುತಿಮ್ಮಾ ‘ಅಂತ ಹಾಡಿರಬೇಕು.
ಏನ ಇರಲಿ ,ಮನಷಾ ಅಂದಮ್ಯಾಲೆ ದಿನಕ್ಕ ಒಮ್ಮೆರೆ ಆಕಳಿಸಲಾರದ,ತೂಕಡಿಸಲಾರದ ಇರಲಿಕ್ಕೆ ಆದೀತ?ಈಗ ಈ ಬರಹವನ್ನು ಓದಕೋತ ನೀವೆಲ್ಲಾರೂ ಅದೆಷ್ಟು ಸಲ ಆಕಳಿಸಿ..ತೂಕಡಿಸಿರತೀರೋ ಭಗವಂತಗಽ ಗೊತ್ತು.
ಇತಿ ಶ್ರೀ ಮಾನವೇತಿಹಾಸ ವತ೯ಮಾನ ಪುರಾಣೇ ಆಕಳಿಕಿ-ತೂಕಡಿಕಿ ಅಧ್ಯಾಯಂ ಸಂಪೂರ್ಣಂ..


~ ಗೌರಿಪ್ರಸನ್ನ

ಕಥೆ ಕಥೆ ಕಬ್ಬಿಣ..

‘ಕನೆಕ್ಟ್ ಆದರೆ ಕಥೆ ..ಬಾಕಿ ಎಲ್ಲ ವ್ಯಥೆ’.

ನಮಸ್ಕಾರ ಅನಿವಾಸಿ ಬಂಧುಗಳೇ,ಇವತ್ತಿನ ಓದಿಗೆ ಸ್ವಾಗತ 

ಕಥೆ ತನ್ನ ಪಾಡಿಗೆ ತಾನೆಲ್ಲೋ ಇರುತ್ತದೆ. ಪ್ರಾಯಶ: ಯಾವ ಕಥೆಗಾರರಿಗೂ ಅವರವರ ಕಥೆಗಳ ಬಗ್ಗೆ ಕರಾರುವಕ್ಕಾದ ಅಭಿಪ್ರಾಯವಿರುವುದಿಲ್ಲವಾದ್ದರಿಂದ ಅವರೆಲ್ಲ ಒಂದಕ್ಕೆ ನಿಲ್ಲಿಸದೇ ಹಲವಾರು ಕಾದಂಬರಿಗಳನ್ನು ರಚಿಸುತ್ತಾರೋ ಏನೋ? ನಾವೂ ಹಾಗೇ. ಸಿನೆಮಾಗಳ ಮೇಲೆ ಸಿನೆಮಾ. ‘ ಇಂಥದ್ದೊಂದನ್ನು ನೋಡೇ ಇಲ್ಲ’ ಎಂದು ಬೊಂಬಡಿ ಬಜಾಯಿಸುತ್ತಾ ಮಾಡುತ್ತಲೇ ಹೋಗುತ್ತೇವೆ. ಕಥೆ ತನ್ನ ಪಾಡಿಗೆ ತಾನೆಲ್ಲೋ ಇರುತ್ತದೆ.
‐--ಯೋಗರಾಜ ಭಟ್.

ಹೌದಲ್ಲವೇ ಕಥೆ ಯಾರ ಹಂಗಿಗೂ ಒಳಗಾಗದೇ, ಯರೊಬ್ಬರನ್ನೂ ಲೆಕ್ಕಿಸದೇ ತನ್ನ ಪಾಡಿಗೆ ತಾನು ಹಾಯಾಗಿ ಎಲ್ಲೋ ಇರುತ್ತದೆ. ಅದನ್ನು ಹೆಕ್ಕುತ್ತ ನಾವು ಹೈರಾಣಾಗುತ್ತೇವೆ. ಬನ್ನಿ.. ಇವತ್ತು 'ಕಥೆಯ ಕಥೆ' ಕೇಳೋಣ..ಅಲ್ಲಲ್ಲ ಓದೋಣ.

~ಸಂಪಾದಕಿ

ಕಥೆಯ ಕಥೆ


‘ಹೀಂಗs ಒಂದ ಊರಾಗ ಒಬ್ಬ ರಾಜಾ ಇದ್ದನಂತ’.. ‘ ಹೀಂಗs ಒಂದ ಅಡವ್ಯಾಗ ಒಂದು ಹುಲಿ ಇತ್ತಂತ’.. ಹೀಗೆ ಈ ‘ಹೀಂಗ ಒಂದ’ ಅಂತ ಕಥಿ ಶುರುವಾದ್ರ ಸಾಕು ಕಣ್ಣ ಅಗಲಿಸಿ, ಮೈಯೆಲ್ಲ ಕಿವಿಯಾಗಿ, ಆ ಅಂತ ಬಾಯಿ ತಕ್ಕೊಂಡು ಅಜ್ಜಿಯ ಮುಂದೆ ಕಾಲದ ಪರಿವೆಯಿಲ್ಲದೇ ಕೂತು ಬಿಡುವುದಿತ್ತು. ನಾವೂ ಆ ಕಥೆಯೊಡನೆ ಆ ಹೀಂಗ ಒಂದ ಊರೋ, ಅಡವಿಯೋ ಏನಿತ್ತೋ ಅಲ್ಲಿಗೇ ಹೋಗಿ ಆ ಗೇಣುದ್ದ ಮನಷಾ ಚೋಟುದ್ದ ಗಡ್ಡದವನೊಡನೆಯೋ, ಬೆಂಡು ಬತ್ತಾಸಿನ ಮಳೆಯಲ್ಲಿ ಎದ್ದ ಹುಡುಗನೊಡನೆಯೋ ಅಡ್ಡಾಡಿ ಬಂದುಬಿಡುತ್ತಿದ್ದೆವು.ಚಿನ್ನದ ಕೂದಲಿನ ರಾಜಕುಮಾರಿ,ಆಸೆಬುರುಕ ನರಿಯಣ್ಣ,ಜಾಣ ಮೊಲದ ಮರಿ, ಮೂರ್ಖ ಕಾಗಕ್ಕ, ಸಪ್ತ ಸಮುದ್ರದಾಚೆಯ ಗಿಣಿಮರಿಯಲ್ಲಿ ಜೀವವಿಟ್ಟುಕೊಂಡಿದ್ಧ ರಾಕ್ಷಸ..ಇವರೆಲ್ಲ ನಮ್ಮ ಭಾವಕೋಶದ ಜೊತೆಗೇ ಬೆರೆತು ಉಸಿರಾಡುತ್ತಿದ್ದರು.ಕಾಗಕ್ಕ- ಗುಬ್ಬಕ್ಕನ ಕಥೆಯಂತೂ ನಮ್ಮ ಫೇವರಿಟ್.
ಅಜ್ಜಿಯ ಕಥೆ ಹೇಳುವ ಚೆಂದವೇ ಬೇರೆ.ಅವಳ ಕಥೆಗಳು ಬಹಳ ರೋಚಕವಾಗಿದ್ದಂಥವು.ಅಕಿ ತನ್ನ ಹಳ್ಳಿಯ ತನ್ನ ಸಣ್ಣಂದಿನ ಅನುಭವದ,ನೆನಪಿನ ಕಥೆಗಳನ್ನೂ ಹೇಳಾಕಿ. ‘ ನಮ್ಮೂರಿಗೆ ಉದ್ದನೆಯ ಬಿಳಿಗಡ್ಡದ ಬಾಬಾ ಬಂದಿದ್ದ..ಕೇಸರಿ ಶಾಟಿ ಉಟಗೊಂಡು. ಅವಾ ಹಿಮಾಲಯಕ್ಕ ಹೋಗಿದ್ನಂತ.’ ಆಕೆ ಹೇಳುತ್ತಿದ್ದರೆ ‘ಹಿಮಾಲಯ ಅಂದ್ರ?!’..ಹಿಂದೆಯೇ ನಮ್ಮ ಪ್ರಶ್ನೆ. ‘ ಅದು ದೂರ ದೇಶದಾಗ( ಇಲ್ಲಿ ದೇಶ ಅಂದ್ರ ಪ್ರದೇಶ.ಬೇರೆ ದೇಶವಲ್ಲ.) ಇರೋ ಬರ್ಫಿನ ಬೆಟ್ಟ’ ಅಲ್ಲೆ ಯಾರಾದರೂ ಹೋದ್ರ ಥಂಡಿಗೆ ಕೈಕಾಲು ಶಟದ ಹೋಗತಾವ.ಬರೇ ಸಾಧುಗಳು ಮತ್ತು ದೇವರು ಅಷ್ಟೇ ಅಲ್ಲಿರತಾರ ಅಂತ ಅಕಿ ಹೇಳತಿದ್ರ ಬಿಜಾಪೂರದ ಬಿಸಿಲ ಝಳದ ನೆಲದ ನನಗೆ ಆ ಶೆಟೆದು ಹೋಗುವ ಥಂಡಿಯ ಕಿಂಚಿತ್ತೂ ಕಲ್ಪನೆಯಾಗದಿದ್ದರೂ ಬರ್ಫಿನ ಬೆಟ್ಟವಷ್ಟೇ ತಲೆಯಲ್ಲುಳಿದು ‘ ಓಹ್! ಹಂಗಾದ್ರ ಆ ಲಾಲ್ ವಾಲಾ ( ಐಸ್ ಕ್ಯಾಂಡಿ ಮಾರುವವ) ನ್ನ ಅಲ್ಲೆ ಕರಕೊಂಡ ಹೋಗಿ ಆ ಸಿಹಿಸಿಹಿ ಕೆಂಪು ದ್ರವವನ್ನೆಲ್ಲ ಅದರ ಮೇಲೆ ಸುರುವಿದ್ರ ಅದೆಷ್ಟು ದೊಡ್ಡ ಐಸ್ಕ್ರೀಂ ಕುಲ್ಫೀ ಆದೀತು ಅಂತ ನಾನು ಮನದಲ್ಲೇ ಲಾಲಾರಸ ಸುರಿಸಾಕಿ. ‘ ಆ ಸಾಧೂಂದು ಹೀಂಗೇ ಒಂದ ಬಟ್ಟ ( ಬೆರಳು) ಹೆಪ್ಪುಗಟ್ಟಿ ಕಪ್ಪ ಆಗಿಹೋಗಿತ್ತ.ಅದರ ಮ್ಯಾಲೆ ಸುತಗಿ ತಗೊಂಡು ಹೊಡದ್ರೂ ಅವಂಗ ನೋವು ಆಗೂದಿಲ್ಲಂತ.’. ಅಕಿ ಕಥಿ ಮುಂದುವರೆಸಿದ್ರ ‘ ಓಹ್! ಒಮ್ಮೆ ಹಂಗಾರ ನಾನೂ ಹೋಗಿ ಪೂರಾ ಮೈನೇ ಹಂಗ ಮಾಡಕೊಂಡು ಬರಬೇಕು. ಅಂದ್ರ ಒಟ್ಟಾಪ್ಪೆ(ಕುಂಟಾಬಿಲ್ಲೆ ) ಆಡಬೇಕಾದ್ರ ಬಿದ್ರೂ ಮೊಣಕಾಲು – ಮೊಣಕೈ ತರಚಂಗಿಲ್ಲ’ ಅಂತೆಲ್ಲ ಹುಚ್ಚುಚ್ಚಾಗಿ ಯೋಚಿಸುತ್ತಿದ್ದುದು ಈಗಲೂ ನೆನಪಿನಲ್ಲಿದೆ.
ಇನ್ನು ಸ್ವಲ್ಪ ಬುದ್ಧಿ ಬಂದಮೇಲೆ ಅವಳು ಹಾಡಿನ ಮೂಲಕ ಹೇಳಿದ ಕಥೆಗಳಂತೂ ಇಡಿಯ ಪುರಾಣ ಪ್ರಪಂಚವನ್ನೇ ನಮ್ಮೆದಿರು ತೆರೆದಿಡುವಂಥವು.
‘ಚೈತ್ರ ಶುದ್ಧ ಹಗಲು ನವಮಿ ರಾಮ ಜನಿಸಿದ
ಬಿದ್ದ ಶಿಲೆಯ ಪಾದದಿಂದುದ್ಧಾರ ಮಾಡಿದ
ಜನಕರಾಯನಲ್ಲಿ ಚಾಪು ತುಣುಕು ಮಾಡಿದ
ಗುಣಕ ಶೀಲ ಸೀತಾದೇವಿ ಮನಕ ಮೆಚ್ಚಿದ’
ಇಡಿಯ ರಾಮಾಯಣದ ಕಥೆ 3-4 ನುಡಿಗಳಲ್ಲಿ ಮುಗಿದುಹೋಗುತ್ತಿತ್ತು.ಮತ್ತೊಂದು ಆಸಕ್ತಿದಾಯಕ ಹಾಡೆಂದರೆ ‘ಕಮಲಮುಖಿ ಸತ್ಯಭಾಮೆ’. ಶ್ರೀಕೃಷ್ಣ- ಸತ್ಯಭಾಮೆಯರ ಸಂವಾದದ ಹಾಡು. ಇಡಿಯ ದಶಾವತಾರದ ಕಥೆಗಳೆಲ್ಲ ರೋಚಕವಾಗಿ ಅದರಲ್ಲಿ ಬಂದುಬಿಡುತ್ತವೆ. ಅದೂ ಒಂಥರಾ ನಿಂದಾ ಸ್ತುತಿಯ ರೂಪದಲ್ಲಿ. ಸತ್ಯಭಾಮೆಯ ಮನೆಗೆ ಬಂದ ಕೃಷ್ಣ
‘ ಕಮಲಮುಖಿ ಸತ್ಯಭಾಮೆ ಬೇಗದಿಂದ ಬಾಗಿಲು ತಗಿ ಅಂತೀನಿ ರಮಣಿ’ ಎಂದರೆ ಅವಳು ,
‘ಯಾರೂ ಅರಿಯೆ ನಿಮ್ಮ ಖೂನು-ಗುರುತು ಇಲ್ಲ, ಹೆಂಗ ತೆಗಿಯಲಿ ರಾತ್ರೀಲಿ ರಮಣ’ ಎಂದು ಪ್ರಶ್ನಿಸುತ್ತಾಳೆ. ಅವನು ತನ್ನ ಪರಿಚಯ ಹೇಳುತ್ತ,
‘ ವೇದ ತುಡುಗು ಮಾಡಿ ಒಯ್ದು ನೀರೊಳು
ಶಂಖದೊಳಗ ಇದ್ದನು ವೈರಿ|
ಮತ್ಸ್ಯವತಾರ ತಾಳಿ ಶಂಖಾಸುರನ ಕೊಂದು ವೇದವ ತಂದೀನಿ ನಾರಿ|
ಕೂರ್ಮವತಾರ ತೊಟ್ಟು ಸಮುದ್ರ ಮಥನ ಮಾಡೀನೆ ಹೊತ್ತು ಗಿರಿ|
ರತ್ನ ತೆಗೆದು ಅಮೃತ ಹಂಚುವಾಗ ರಾಹು-ಕೇತುವಿನ ಮಾಡೀನಿ ಸೂರಿ|
ರಸಾತಳಕೆಳೀತಿದ್ದ ಭೂಮಿ ಕೇಳ್
ದೇವರಾದರೆಲ್ಲ ಗಾಬರಿ|
ಸತ್ಯವರಾಹನಾಗಿ ಭೂಮಿ ಹೊತ್ತು ಮ್ಯಾಲಕ ಎತ್ತೀನಿ ಕ್ವಾರಿ|
ಹಿರಣ್ಯಕಶಿಪು ಶಂಭುವಿನ ವರದಾ
ವಿಷ್ಣುಭಕ್ತ ಮಗ ಪ್ರಹ್ಲಾದ|
ತಂದೆ- ಮಗಗ ಬಿದ್ದೀತೋ ವಾದ
ಸಿಟ್ಟಿನಿಂದ ಕಶ್ಯಪ ಕಂಭಕೊದ್ದ
ನಾ ಬಂದೆನಾರ್ಭಾಟದಿಂದ
ಹೊಸ್ತಿಲದೊಳಗ ಹೊಟ್ಟಿ ಸೀಳಿದರ ಕೇಳ ಭಾಮಿನಿ ಆತನ ಮರಣ’
ಎಂದು ಪರಾಕ್ರಮ ಕೊಚ್ಚಿಕೊಂಡ ಅವನ ಕಾಲನ್ನೆಳೆವ ಭಾಮೆಯ ಕುಚೋದ್ಯದ ಉತ್ತರ ಕೇಳಿ..
‘ ಮತ್ಸ್ಯನೆಂದು ಬಲು ಬಡಾಯಿ ಹೇಳತಿ
ಹೆಂಗ ಬಂದ್ಯೋ ನೀ ಊರಾಗ|
ಕೂರ್ಮನಾದರ ಇಲ್ಲಿಗ್ಯಾಕ ಬಂದಿ
ಬೀಳಹೋಗೋ ನೀ ಭಾವ್ಯಾಗ|
ಸತ್ಯ ವರಾಹನೆಂದು ಸಾಕ್ಷಿ ಹೇಳತಿ ಭೂಮಿ ಹೊತ್ತ ಕಸರತ್ತ ಎನಗ ತಲೆ ಎತ್ತದೇ ತಿರುಗುತ ಹೋಗಿರಿ ಹಸಿಮಣ್ಣು ತಿಂದಡವ್ಯಾಗ|
ಭಾಳ ಭಾಳ ಹೇಳತಿದ್ದಿ ಕಸರತ್ತ
ನರಸಿಂಹನವತಾರದ ಮಾತ |♧
ಸಿಂಹನಾದರ ಗುಡ್ಡದಾಗ ಇರಹೋಗು ಇಲ್ಲಿಗ್ಯಾಕ ಬಂದಿರಿ ಕಾರಣ’
ಹೀಗೆಯೇ ಎಲ್ಲ ಅವತಾರಗಳ ಬಗ್ಗೆ ಅವನ ಬಡಾಯಿ, ಅವಳ ಹೀಯಾಳಿಸುವಿಕೆ ನಡೆದು ಕೊನೆಗೆ
‘ನಿನ್ನ ಪ್ರಾಣವಲ್ಲಭ ಮನದನ್ನ’ ಬಂದಿದ್ದೇನೆಂದ ಮೇಲೆಯೇ ಅವಳು ಬಾಗಿಲು ತೆಗಯುವುದು. ಹೇಳಿ ಕೇಳಿ ‘ಸರಸಕೆ ಕರೆದರೆ ವಿರಸವ ತೋರುವ’ ಸತ್ಯಭಾಮೆ ಅವಳು.ಸುಮ್ಮನೆ ಇಷ್ಟು ಸುಲಭಕ್ಕೆ ಬಿಟ್ಟಾಳೆಯೇ?
ನಮ್ಮ ಓಣ್ಯಾಯಿ(ಅಜ್ಜಿ) ರಾಗವಾಗಿ ಈ ಹಾಡು ಹಾಡುತ್ತಿದ್ದರೆ ದಶಾವತಾರದ ಎಲ್ಲ ಕಥೆಗಳೂ ಕಣ್ಣಮುಂದೆ ಸಿನೆಮಾ ರೀಲಿನಂತೆ ಉರುಳುತ್ತಿದ್ದವು.
ಸ್ವಲ್ಪ ದೊಡ್ಡವರಾದ ಮೇಲೆ ಅಂದರೆ ಸುಮಾರು 4-5 ನೇಯತ್ತೆ ಹೊತ್ತಿಗೆ ಓದುವ ಹುಚ್ಚು ಅಂಟಿಕೊಂಡಾದ ಮೇಲೆ ಆಹಾ! ಆ ಚಂದಮಾಮ, ಬೊಂಬೆಮನೆ, ಬಾಲಮಿತ್ರದ ಆ ರೋಚಕಕಥೆಗಳು..ಆರು ಬೆರಳಿನ ಉದ್ದ ಗಡ್ಡದ ಮಾಂತ್ರಿಕ, ಛಕ್ಕಂತ ವೇಷ ಬದಲಿಸಿ ಬರುವ ಮಾಟಗಾತಿ,ಕೂದಲೆಳೆ- ಉಗುರುಗಳಿಂದ ಮಾಟ ಮಾಡುವ ತಾಂತ್ರಿಕ , ವಿಕ್ರಮಾದಿತ್ಯನ ಹೆಗಲಿನಿಂದ ಹಾಹ್ಹಾಹಾ ಎಂದು ನಗುತ್ತ ಹಾರಿಹೋಗಿ ಗಿಡದ ಟೊಂಗೆಗೆ ನೇತಾಡುವ ಬೇತಾಳ..ನಮ್ಮಕಲ್ಪನೆಗೊಂದು ಎಲ್ಲೆಯೇ ಇಲ್ಲದಂತೆ ಮಾಡಿದವಷ್ಟೇ ಅಲ್ಲ ಜೊತೆಗೇ ಇಲ್ಲದ ಭಯವನ್ನೂ ಅಲ್ಪಸ್ವಲ್ಪ ಹುಟ್ಟು ಹಾಕಿದವೆನ್ನಿ. ನಾನಾಗ 4 ನೇಯತ್ತೆ ಹುಡುಗಿ. ಒಂದು ಕಥೆ ಓದಿದ್ದೆ. ಅದರಲ್ಲಿ ಸುಳ್ಳು ಮಾತಾಡಿದರೆ ತಲೆಯ ಮೇಲೆ ಕೊಂಬು ಮೂಡುತ್ತವೆ. ಪ್ರತಿಸಲ ಸುಳ್ಳು ಹೇಳಿದಾಗೆಲ್ಲ ಒಂದೊಂದು ಇಂಚು ಬೆಳೆಯುತ್ತ ಹೋಗಿ , ಹೀಗೆಯೇ ಬಹಳ ಸಲ ಸುಳ್ಳು ಹೇಳಿದ ಹುಡುಗನ ತಲೆಯ ಕೊಂಬುಗಳು ಬೆಳೆದು ಬೆಳೆದು ಮೇಲೆ ಜಂತಿಗೆ ಸಿಕ್ಕಿಹಾಕಿಕೊಂಡು ಬಿಡುತ್ತವೆ. ಆದನ್ನೋದಿದ ಮೇಲೆ ವರುಷಗಟ್ಟಲೆ ಸಣ್ಣ ಸುಳ್ಳು ಹೇಳಿದರೂ ಹತ್ತುಸಲ ತಲೆಮುಟ್ಟಿ ನೋಡಿಕೊಳ್ಳುತ್ತಿದ್ದೆ. ಒಮ್ಮೆ ಯಾಕೋ ಪಕ್ಕದ ಶಿವಮೊಗ್ಗಿ ಅವರ ಮನೆಗೆ ಹೋಗಿದ್ದೆ. ಊಟಕ್ಕೆ ಕುಳಿತಿದ್ದ ಅವರು, ‘ಬಾರs ಊಟ ಮಾಡು ಬಾ’ ಎಂದು ಕರೆದರು. ಹಾಗೆಲ್ಲ ಊಟ-ತಿನಿಸಿಗೆ ಯಾರಾದರೂ ಕರೆದರೆ ಹೂಂ ಅಂತ ಹೊರಟುಬಿಡಬಾರದು.ನಮ್ಮ ಊಟ ಆಗಿದೆ ಅಂತ ಹೇಳಬೇಕು ಎನ್ನುವುದು ಮನೆಯಲ್ಲಿ ಹಿರಿಯರು ವಿಧಿಸಿದ್ದ ನಿಯಮವಾಗಿದ್ದರಿಂರ ಹಾಗೇ ಹೇಳಿದೆ. ‘ಇರಲಿ ಬಾ. ಚೂರೇ ಪಾಯಸ ತಿನ್ನು’ ಎಂದರು. ‘ ನಮ್ಮನೆಯಲ್ಲೂ ಅದೇ’ ಎಂದೆ. ಹೀಗೇ ಅವರು ಒತ್ತಾಯಿಸಿ ಕರೆಯುವುದು, ನಾನು ಸುಳ್ಳು ಹೇಳುತ್ತ ಹೋಗಿ ನೋಡುತ್ತಿದ್ದಂತೇ 8-10 ಸುಳ್ಳುಗಳಾಗಿ ಇನ್ನೇನು ಕೊಂಬು ಬೆಳೆದು ನಾನಿಲ್ಲೇ ಇವರ ನಡುಮನೆಯಲ್ಲೇ ಸಿಕ್ಕಿಹಾಕಿಕೊಂಡು ಬಿಡುತ್ತೇನೆಂದು ತುಂಬ ಭಯವಾಗಿ ಅಳಲು ಶುರು ಮಾಡಿದ್ದೆ. ನನ್ನ ಅವಸ್ಥೆ ನೋಡಿ ಪಾಪ ಅವರಿಗೂ ಗಾಬರಿ .
ಇನ್ನೊಮ್ಮೆ ನಮ್ಮ ಸ್ನೇಹಿತರಂತೆ, ಮನೆಯವರಂತೆ ವೇಷ ಬದಲಿಸಿ ಬರುವ ದೆವ್ವದ ಕಥೆ ಓದಿದಾಗಲಂತೂ ನನ್ನ ಪಾಡು ನಾಯಿಪಾಡಾಗಿತ್ತು. ಜೊತೆಗಿದ್ದವರೆಲ್ಲ ಇವರು ನಿಜದವರೋ, ವೇಷಧಾರಿ ದೆವ್ವಗಳೋ ಎಂದು ಹೆದರಿಕೆಯಾಗಿಬಿಡುತ್ತಿತ್ತು. ಅದೂ ಬಿಜಾಪೂರದ ನಮ್ಮ ಮುದ್ದಣ್ಣ ಮಾಮಾನ ಆ ದೊಡ್ಡ ಮನೆಯಲ್ಲಿ ರಾತ್ರಿವೇಳೆ ಬಚ್ಚಲಿಗೆ ಹೋಗಬೇಕಾಗಿ ಬಂದರಂತೂ ಮುಗಿದೇಹೋಯ್ತು. ಪಡಸಾಲೆಯಲ್ಲಿ ಮಲಗಿದ ನಾವು ನಡುಮನೆ, ದೊಡ್ಡ ಅಡುಗೆಮನೆ ದಾಟಿ ಬಚ್ಚಲಿಗೆ ಅದೂ ಎಂಥಾ ಬಚ್ಚಲು ಅಂತೀರಿ 3-4 ಮೆಟ್ಟಿಲುಗಳ , 3-4 ಕಂಬಗಳುಳ್ಳ ದೆವ್ವನಂಥಾ ಬಚ್ಚಲು. ಅಲ್ಲಿ ಒಂದೆಡೆ ಕುಳ್ಳಿನ ಚೀಲ, ಎತ್ತರಕ್ಕೆ ಒಟ್ಟಿದ ಕಟ್ಪಿಗೆಗಳು, ಅವುಗಳ ಸಂದಿಯಲ್ಲೆಲ್ಲೋ ಕಣ್ಣಿಗೆ ಕಾಣದೇ ದಡಬಡ ಮಾಡುವ ಇಲಿಯ ಸಂಸಾರಗಳು, ಉದ್ದ ಮೀಸೆ ಝಳಪಿಸುವ ಜೊಂಡಿಂಗಗಳು..ಸಾಲದ್ದಕ್ಕೆ ಎದುರಿಗೊಂದು ಎರಡು ಸರಳುಗಳ ಸಣ್ಣ ಕಿಡಕಿ. ನಮ್ಮ ಪಪ್ಪೂಮಾಮ( ನನ್ನ ಸಣ್ಣ ಸೋದರ ಮಾವ) ‘ ರಾತ್ರಿ ಬಚ್ಚಲಿಗೆ ಹೋದ್ರ ಆ ಕಿಡಕಿ ಕಡೆ ನೋಡಬ್ಯಾಡ್ರಿ ಎರಡು ಕೆಂಪುಕಣ್ಣು ನಿಮ್ಮನ್ನೇ ನೋಡತಿರತಾವ. ನೀವೇನರ ಅಪ್ಪಿತಪ್ಪಿ ನೋಡಿದ್ರ ತನ್ನ ಉದ್ದನ್ನ ಕೆಂಪು ನಾಲಿಗೆ ಚಾಚಿ ಎಳಕೊಂಡು ಬಿಡತಾವ’ ಅಂತೆಲ್ಲ ಏನೇನೋ ಹೇಳಿ ನಮ್ಮನ್ನು ಕಾಡಿ ಹೆದರಿಸಿರುತ್ತಿದ್ದ. ಹೀಗಾಗಿ ಯಾವಾಗಲೂ ಅಜ್ಜಿಯನ್ನೆಬ್ಬಿಸಿ ಅವಳ ಬೆಂಗಾವಲಿನಲ್ಲೇ ರಾತ್ರಿ ಬಚ್ಚಲಿಗೆ ಹೋಗುವುದು. ಆದರೆ ಈ ವೇಷ ಬದಲಿಸುವ ದೆವ್ವದ ಕಥೆ ಓದಿದ ಮೇಲೆ ಹಿಂದೆ ಬರುತ್ತಿರುವುದು ಓಣ್ಯಾಯಿನೋ ಅಥವಾ ದೆವ್ವವಿರಬಹುದೋ ಎಂದು ಶುರುವಾದ ಸಂಶಯ ಕೆಲವೇ ಸೆಕೆಂಡುಗಳಲ್ಲಿ ಪೆಡಂಭೂತವಾಗಿ ಬೆಳೆದು ನನ್ನನ್ನು ನಡುಗಿಸಿಬಿಡುತ್ತಿತ್ತು. ಅಮ್ಮ ಹೇಳಿಕೊಟ್ಟ ‘ ನಿರ್ಭಯತ್ವಂ ಅರೋಗತಾಂ’ ದ ಹನುಮಪ್ಪನೋ, ಅಜ್ಜ ಕಲಿಸಿದ ‘ ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ’ ದ ರಾಯರೋ ಹೇಗೋ ನನ್ನನ್ನು ಕಾಯುತ್ತಿದ್ದರೆನ್ನಿ.
ರಾಯರು(ರಾಘವೇಂದ್ರ ಸ್ವಾಮಿಗಳು) ಅಂದಕೂಡಲೇ ಮತ್ತೊಂದು ಘಟನೆ ನೆನಪಾಯ್ತು. ಒಮ್ಮೆ ರಜೆಗೆಂದು ನಿಪ್ಪಾಣಿಗೆ ನಮ್ಮ ಇನ್ನೊಬ್ಬ ಸೋದರಮಾವನ ಮನೆಗೆ ಹೋಗಿದ್ದೆ. ಬಹಳ ಹೊತ್ತು ರಾತ್ರಿ ಹರಟೆ, ಮಾತುಕತೆಯ ಜೊತೆಗೇ ನನ್ನ ಕಸಿನ್ಸ್ ತಮ್ಮ home-work ನ್ನೂ ಮುಗಿಸಿ, ಪಾಟಿ- ಪುಸ್ತಕ ಎಲ್ಲ ಎತ್ತಿಟ್ಟು ಇನ್ನೇನು ಮಲಗಲು ಅಣಿಯಾದೆವು.
ಪೆನ್ಸಿಲ್ ಬಾಕ್ಸ್ ಒಂದು ತಂಗಿ ಭೂದೇವಿಯ ತಲೆದಿಂಬಿನ ಪಕ್ಕಕ್ಕೆ ಉಳಿದುಹೋಗಿತ್ತು. ನಾನು ಮರೆತು ಉಳಿದಿದೆಯೇನೋ ಎಂದು ಎತ್ತಿಡಲು ಹೋದರೆ ‘ ಅವ್ವಾ, ಗೌರಕ್ಕಾ ಅದನ್ನ ತಗೀಬ್ಯಾಡವಾ. ಅದರಾಗ ರಾಯರು, ಹನುಮಪ್ಪ ಎಲ್ಲ ಇದ್ದಾರ. ಕೆಟ್ಟ ಕನಸು ಬೀಳಬಾರದು, ರಾತ್ರಿ ಅಂಜಿಕಿ ಬರಬಾರದು ಅಂತ ಇಟಗೊಂಡೀನಿ’ ಅಂದಳು. ನಾನು ಅರೇ! ತ್ರಿಜ್ಯ, ಕೋನಮಾಪಕ, ಸೀಸಕಡ್ಡಿಗಳ ಬದಲು ಇದರಲ್ಲಿ ದೇವರು ಹೆಂಗ ಬಂದ್ರು ಅಂತ ತೆಗೆದು ನೋಡಿದರೆ ಅದರಲ್ಲಿ ರಾಯರ-ಹನುಮಪ್ಪನ ಸಣ್ಣ ಸಣ್ಣ ಫೋಟೋಗಳು. ಆಮೇಲೆ ಗೊತ್ತಾಯಿತು ಇದು ಅನಂತನಾಗ್ ನ ‘ ನಾ ನಿನ್ನ ಬಿಡಲಾರೆ’ ಸಿನೆಮಾದ ಕಥೆ ಕೇಳಿದ್ದರ ಪ್ರಭಾವ ಅಂತ. (ಇನ್ನು ಸಿನೆಮಾ ನೋಡಿದ್ದರೆ ಏನಾಗುತ್ತಿತ್ತು ಆ ‘ ಕಾಮಿನಿ’ ಗೇ ಗೊತ್ತು ) ಅಂತೂ ಈಗಲೂ ಅವಳ ಭೇಟಿಯಾದಾಗ ಈ ಕಥೆ ನೆನೆಸಿಕೊಂಡು ನಗುತ್ತೇವೆನ್ನಿ.

ಈಗ ಅಜ್ಜಿಯ ಕಥೆಗಳನ್ನು ಚೆಂದ ಚೆಂದದ ಕಾರ್ಟೂನ್ ಗಳು ಹೇಳುತ್ತವೆ.ತನ್ನ ಚಿಕ್ಕಂದಿನಲ್ಲಿ ‘snow-white ‘ ನೋಡುತ್ತ ಕಣ್ಣೀರು ಸುರಿಸುತ್ತಿದ್ದ, Tom & Jerry ಯಲ್ಲಿ ಕನಸು ನೋಡುತ್ತಿರುವ Tom ನನ್ನು ನೋಡಿ ಸೋಫಾದ ಮೇಲೆ ಉರುಳಾಡಿ ನಗುತ್ತಿದ್ದ ನನ್ನ ಮಗನ ಚಿತ್ರ ಈಗಲೂ ನನ್ನ ಕಣ್ಣ ಮುಂದಿದೆ.ದೃಶ್ಯಮಾಧ್ಯಮ ಯಾವಾಗಲೂ ಹೆಚ್ಚು ರಮಣೀಯ ಹಾಗೂ ಆಕರ್ಷಕವಲ್ಲವೇ?
ಕಥೆಗಳೂ ದೇವರಂತೆ ಅನಾದಿ-ಅನಂತ- ವಿಶ್ವವ್ಯಾಪಿ.ಅವುಗಳ ರೀತಿ, ಮಾಧ್ಯಮಗಳು ಬದಲಾದರೇನಂತೆ? ಜಗವಿರುವತನಕ ಕಥೆಗಳಿರುತ್ತವೆ. ನಮ್ಮ ಕಥೆ, ನಿಮ್ಮ ಕಥೆ, ಅವರ ಕಥೆ, ಇವರ ಕಥೆ, ಕಂಸನ ಕ್ರೌರ್ಯ ದ ಕಥೆ, ಬುದ್ಧನ ಕರುಣೆಯ ಕಥೆ, ಶಕುನಿಯ ಕುತಂತ್ರದ ಕಥೆ,ವಿದುರನ ನೀತಿಕಥೆ, ರಾಮನ ಶೌರ್ಯ ದ ಕಥೆ, ಭೀಮನ ಬಲದ ಕಥೆ, ಸಿರಿವಂತರ ಸೊಕ್ಕಿನ ಕಥೆ, ಬಡವರ ಹಸಿವಿನ ಕಥೆ, ಸೋತ ಕಥೆ, ಗೆದ್ದ ಕಥೆ, ನಗುವ ಕಥೆ, ಅಳುವ ಕಥೆ, ಸನ್ಯಾಸದ ಕಥೆ, ಗಾರ್ಹಸ್ಥ್ಯದ ಕಥೆ, ಸಾಮಾನ್ಯರ ಸಾಮಾನ್ಯ ಕಥೆ , ಸಂತೆಯ ಸೌತೆ-ಬದನೆಗಳ ಕಥೆ, ಹೋರಾಟದ ಕಥೆ, ಯಶಸ್ಸಿನ ಕಥೆ,ಅಪ್ಪುವ ಕಥೆ, ದಬ್ಬುವ ಕಥೆ, ಮಿನಿ ಕಥೆ,ಹನಿಗಥೆ, ಸಣ್ಣ ಕಥೆ,ನೀಳ್ಗಥೆ, ಕಾವ್ಯ-ಕಾದಂಬರಿಗಳ ಕಥೆ...ಮುಗಿಯದ,ನಿಲ್ಲದ ಕಥೆ .

~ ಗೌರಿಪ್ರಸನ್ನ