ಮೂರನೆಯ ಚಾರ್ಲ್ಸ್ – King Charles III

ನನಗನ್ನಿಸುವಂತೆ ಅನಿವಾಸಿಯ ಬಳಗದ ಸದಸ್ಯರೆಲ್ಲರ (ಹೆಚ್ಚು-ಕಮ್ಮಿ ಎಲ್ಲರ ಅನ್ನೋಣವೇ?) ಜೀವನ ಕಾಲದಲ್ಲಿ ಇದು ಮೊದಲನೆಯ ಸಿಂಹಾಸನಾರೋಹಣ, ಈ ಶನಿವಾರ ಅಂದರೆ ನಾಳೆ 2023 ರ ಮೇ 6 ರಂದು ಜರುಗಲಿದೆ.  ಕಳೆದ 70 ವರ್ಷಗಳಿಂದ ರಾಜಕುಮಾರನಾಗಿಯೇ ಉಳಿದಿದ್ದ ಚಾರ್ಲ್ಸ್, 7 ತಿಂಗಳ ಹಿಂದೆ ರಾಣಿ ಎಲಿಜಬೆತ್ ರ ಮರಣಾನಂತರ ರಾಜನಾದರೂ, ಈ ವಾರದ ಕೊನೆಯಲ್ಲಿ ಅಧಿಕೃತ ಸಮಾರಂಭದಲ್ಲಿ ಪತ್ನಿ ಕಮಿಲಾರೊಂದಿಗೆ ಸಿಂಹಾಸನವನ್ನು ಏರಲಿದ್ದಾರೆ.  53 ಕ್ಕೂ ಹೆಚ್ಚು ಅವಧಿಯ ತಮ್ಮ ಅಪ್ರೆಂಟಿಸ್ ಅನುಭವವನ್ನು ವೃತ್ತಿಯಲ್ಲಿ ಯಶಸ್ವಿಯಾಗಿ ಬಳಸುವ ಅವಕಾಶ ಪಡೆಯಲಿದ್ದಾರೆ.  ಈ ಸಂದರ್ಭದಲ್ಲಿ ನಮ್ಮ ಅನಿವಾಸಿ ಬಳಗದ “ಡೇವಿಡ್ ಬೇಯ್ಲಿ” ಹವ್ಯಾಸಿ ಛಾಯಾಗ್ರಾಹಕರೊಬ್ಬರು, ಸುಮಾರು ಅರ್ಧ ಶತಮಾನದ ಹಿಂದೆ ತಾವು ಕಿಂಗ್ ಚಾರ್ಲ್ಸ್ ಅವರ ಜೀವನದ ಒಂದು ಭಾಗದಲ್ಲಿ ಹೇಗೆ ಹಾಯ್ದು ಬಂದರೆಂದು ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಓದುಗರಲ್ಲೂ ಹಲವರು ಈರೀತಿಯ ಅನುಭವಗಳ ಪಟ್ಟಿಮಾಡುವವರಿರಬಹುದು – ದಯವಿಟ್ಟು ಪ್ರತಿಕ್ರಿಯೆ ಬರೆದು ನಮ್ಮೊಂದಿಗೆ ಹಂಚಿಕೊಳ್ಳಿ.

ಮೊದಲಿಗೆ ರಾಜ ಚಾರ್ಲ್ಸ್ ರ ಜೀವನಕಾಲದ ಒಂದು ಝಲಕನ್ನು ನೋಡೋಣ.  ಹಲವಾರು ಅಂತರ್ಜಾಲ ತಾಣಗಳು ಈ ಚಿಕ್ಕ ಬರಹದ ಸಾಮಗ್ರಿ ಒದಗಿಸಿದ ಮೂಲಗಳು – royal.uk, britroyals.com, theguardian.com, smithsonianassociates.org ಇತ್ಯಾದಿ. – ಲಕ್ಷ್ಮೀನಾರಾಯಣ ಗುಡೂರ (ವಾರದ ಸಂಪಾದಕ)

ಮೂರನೆಯ ಚಾರ್ಲ್ಸ್ - ಕಿಂಗ್ ಚಾರ್ಲ್ಸ್ ದ ಥರ್ಡ್

ಜನಪ್ರಿಯ ರಾಣಿ ಎರಡನೆಯ ಎಲಿಜಬೆತ್ ಹಾಗೂ ರಾಜಕುಮಾರ ಫಿಲಿಪ್ (ಡ್ಯೂಕ್ ಆಫ಼ ಎಡಿನ್ಬರಾ) ಇವರ ಮೊದಲ ಮಗ.
ಸ್ಕಾಟ್ಲಂಡಿನಲ್ಲಿ ಮತ್ತು ಕೇಂಬ್ರಿಜ್ ನ ಟ್ರಿನಿಟಿ ಕಾಲೇಜಿನಲ್ಲಿ ವಿದ್ಯಾಭ್ಯಾಸ. 
ಜುಲೈ 1, 1969 ರಂದು ಪ್ರಿನ್ಸ್ ಆಫ್ ವೇಲ್ಸ್ ಪದವಿ.  ಅಲ್ಲಿಂದ ಕೇಂಬ್ರಿಜ್ ಹಾಗೂ ರಾಯಲ್ ವಿಮಾನ ದಳದಲ್ಲಿ ಕಲಿಕೆ. 1971 ರಲ್ಲಿ ಅವರ ತಂದೆ ಹಾಗೂ ತಾತನ ಹೆಜ್ಜೆಗಳನ್ನನುಸರಿಸಿ, ನೌಕಾದಳಕ್ಕೆ ಸೇರಿಕೆ.

1981 ರ ಜುಲೈ 29ರಂದು ಡಯಾನಾ ಅವರೊಂದಿಗೆ ಮದುವೆ.  ಅವರ ವೈವಾಹಿಕ ಜೀವನ ಹಲವು ಏರುಪೇರುಗಳಿಂದ ಕೂಡಿದ್ದು, 1993ರಲ್ಲಿ ಅವರಿಬ್ಬರ ಬೇರ್ಪಡುವಿಕೆಯಲ್ಲಿ ಕೊನೆಗೊಂಡಿತು.  2005 ರಲ್ಲಿ ಚಾರ್ಲ್ಸ್ ಮತ್ತೆ ಕಮಿಲಾ ಅವರನ್ನು ಮದುವೆಯಾದರು. 

ರಾಜನಾಗುವ ಮೊದಲಿನಿಂದಲೂ ಚಾರ್ಲ್ಸ್ ಸೈನ್ಯದ, ಸೈನಿಕರ ಜೊತೆಯ ತಮ್ಮ ಬಾಂಧವ್ಯವನ್ನು ಗಟ್ಟಿಯಾಗಿ ಇಟ್ಟುಕೊಂಡಿದ್ದಾರೆ.  ಹಲವಾರು ಚಾರಿಟಬಲ್ ಸಂಸ್ಥೆಗಳ ಪೋಷಕನಾಗಿ, ಅವುಗಳ ಕೆಲಸವನ್ನು ಪ್ರೋತ್ಸಾಹಿಸಿಕೊಂಡು ಬಂದಿದ್ದಾರೆ.  ವೇಲ್ಸ್ ಹಾಗೂ ಸ್ಕಾಟ್ಲಂಡ್ ಗಳ ಮೇಲಿನ ಅವರ ಪ್ರೀತಿ ಸುಲಭವಾಗಿ ಕಂಡುಬರುವಂಥದ್ದು. ಇವೆಲ್ಲದರೊಂದಿಗೆ ಚಾರ್ಲ್ಸ್ ರ ನಿಸರ್ಗ ಪ್ರೇಮ, ಅವರನ್ನು ಹಲವಾರು ಜಾಗತಿಕ ಹಾಗೂ ಸ್ಥಳೀಯ ಸವಾಲುಗಳೊಂದಿಗೆ ಸೆಣಸುವ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡಿಸಿದೆ.  ಸುಸ್ಥಿರ ಭವಿಷ್ಯ (sustainable future), ಅಭಿವೃದ್ಧಿಗಾಗಿ ಅವರ ಹೋರಾಟ ಮುಂದುವರೆದಿದೆ.

ಮೂರನೆಯ ಚಾರ್ಲ್ಸ್, ಯುನೈಟೆಡ್ ಕಿಂಗ್ಡಮ್ ನ 22ನೆಯ ಸಿಂಹಾಸನಾಧೀಶ / ರಾಜ.  ಮುತ್ತಾತ ಐದನೆಯ ಜಾರ್ಜ್ ರಿಂದ ಸ್ಥಾಪಿತವಾದ ವಿಂಡ್ಸರ್ ಮನೆತನದ 6ನೇ ರಾಜ.  ಆಸ್ಟ್ರೇಲಿಯಾ, ನ್ಯೂಜಿಲಂಡ್, ಕೆನಡಾ ಸೇರಿದಂತೆ 16 ದೇಶಗಳ ರಾಜಪಟ್ಟ (ನೇರ ಆಡಳಿತವಿಲ್ಲದ ಸ್ವತಂತ್ರ ದೇಶಗಳು). 54 ಸ್ವತಂತ್ರ ದೇಶಗಳ ಸದಸ್ಯತ್ವದ ಕಾಮನ್ ವೆಲ್ತ್ ಕೂಟದ ಮುಖ್ಯಸ್ಥ.  
ಅತ್ಯಂತ ಜನಪ್ರಿಯ ರಾಣಿಯಾಗಿ 70 ವರ್ಷಕ್ಕೂ ಹೆಚ್ಚು ಕಾಲ ಇಲ್ಲ-ಸಲ್ಲದ ಕಾಂಟ್ರೋವರ್ಸಿಗಳಿಲ್ಲದೇ ’ರಾಜ್ಯಭಾರ’ ಮಾಡಿದ ಎರಡನೆಯ ಎಲಿಜಬೆತ್ ರಾಣಿಯ ಉತ್ತರಾಧಿಕಾರಿಯಾಗಿ ಸಿಂಹಾಸನವನ್ನೇರುವುದು ಸುಲಭದ ಮಾತಲ್ಲ.  ಹಾಗೆಯೇ ಸುರಳೀತವಾಗಿ ಹೊಸ ರಾಜನ ರಾಜ್ಯಾಡಳಿತವೂ ನಡೆಯಲೆಂದು ಹಾರೈಸೋಣ. 

-ಲಕ್ಷ್ಮೀನಾರಾಯಣ ಗುಡೂರ.

*********************************************************

ನಾನು ರಾಯಲ್ ಫೋಟೋಗ್ರಾಫರ್ (ಅನಧಿಕೃತ) ಆದ ದಿನ! - ಡಾ. ಶ್ರೀವತ್ಸ ದೇಸಾಯಿ
ಇದೇ ವಾರ ಲಂಡನ್ನಿನಲ್ಲಿ ಮೂರನೆಯ ಕಿಂಗ್ ಚಾರ್ಲ್ಸ್ ನ ಪಟ್ಟಾಭಿಷೇಕ ನಡೆಯಲಿದೆ. ರಾಣಿ ಎಲಿಝಬೆತ್ ಪಟ್ಟಕ್ಕೇರಿದ ವರ್ಷ
1952. ಆಗ ನಾಲ್ಕು ವರ್ಷದವನಾಗಿದ್ದ ಆತ ಈ ದಿನಕ್ಕಾಗಿ ಎಪ್ಪತ್ತು ವರ್ಷಗಳೇ ಕಾಯ್ದಿರ ಬಹುದು. ಆತನ ’ಹೆಡ್ ಅಂಡ್
ಶೋಲ್ಡರ್’ ಫೋಟೋ ತೆಗೆದು ನನ್ನನ್ನೊಬ್ಬ ಅನಧಿಕೃತ ಫೋಟೋಗ್ರಾಫರ್ ಅಂತ ನಾನೇ ಅಂದುಕೊಳ್ಳುತ್ತ ನಾನು 45
ವರ್ಷಗಳಿಂದ ಈ ದಿನಕ್ಕಾಗಿ ಕಾಯುತ್ತಿದ್ದೇನೆ ಅಂದರೆ ಬರೀ ಉಡಾಫೆ ಅಂದುಕೊಳ್ಳದೆ ಆ ಕಥೆಯನ್ನು ಕೇಳಿ ಆಮೇಲೆ ಹೇಳಿರಿ!

ರೆಡ್ ಲೆಟ್ಟರ್ ಡೇ, ಜೂಲೈ, 1978.
ಹದಿನೈದನೆಯ ಶತಮಾನದಿಂದಲೂ ಹಬ್ಬದ ದಿನಗಳ ಪ್ರಥಮಾಕ್ಷರವನ್ನು ಕೆಲೆಂಡರಿನಲ್ಲಿ ಕೆಂಪು ಅಕ್ಷರಗಳಿಂದ ಮುದ್ರಿಸುವ ಈ ರೀತಿಯ ಪರಿಪಾಠ ಪ್ರಿಂಟರ್ ವಿಲಿಯಮ್ ಕ್ಯಾಕ್ಸ್ಟನ್ ಶುರುಮಾಡಿದ ಕಾಲದಿಂದ ಬಂದಿದೆ ಅಂತ ಪ್ರತೀತಿ.
ನನ್ನ ಪಾಲಿಗೆ ಆ ದಿನ ಅಂಥದೊಂದು ದಿನ. ಒಂದು ಕೆಂಪು ಹೆಲಿಕಾಪ್ಟರನ್ನು ತಾನೇ ಪೈಲಟ್ ಆಗಿ ನಡೆಸಿಕೊಂಡು ಯು ಕೆ ನ ವೇಲ್ಸ್ ಪ್ರಾಂತದ ಮರ್ಥರ್ ತಿಡ್ಫಿಲ್ ಎನ್ನುವ ಊರಿನ ’ಪ್ರಿನ್ಸ್ ಚಾರ್ಲ್ಸ್ ಆಸ್ಪತ್ರೆ’ಯ ಖಾಲಿ ಕಾರ್ ಪಾರ್ಕಿನಲ್ಲಿ ಬಂದಿಳಿದಾಗ ರೆಡ್ ಲೆಟ್ಟರ್ ಡೇ ಆಯಿತು.  ಅಷ್ಟೇ ಏಕೆ, ಆತನ ಹೆಸರಿನಲ್ಲಿ ನಾಮಕರಣವಾಗಿ ಅದನ್ನು ಅಧಿಕೃತವಾಗಿ ಉದ್ಘಾಟನೆ ಮಾಡಿಸಿದ ಆಸ್ಪತ್ರೆಯ ಸಿಬ್ಬಂದಿ ಮತ್ತು ಅಲ್ಲಿ ನೆರೆದ ನೂರಾರು ಜನರಿಗೂ ಅದು ಮರೆಯಲಾರದ ದಿನ. ಆಗ ಮೋಬೈಲ್ ಕ್ಯಾಮರಾಗಳು ಹುಟ್ಟಿರಲಿಲ್ಲ. ಅದೇ ಆಸ್ಪತ್ರೆಯಲ್ಲಿ ಎರಡು ವರ್ಷಗಳಿಂದ ಜೂನಿಯರ್ ಡಾಕ್ಟರ್ ಆಗಿ ಕೆಲಸ ಮಾಡುತ್ತಿದ್ದ ನಾನು ಒಂದು ಹಳೆಯ ಮಾದರಿಯ ಅಶಾಯಿ ಪೆಂಟಾಕ್ಸ್ Asahi Pentax ಕ್ಯಾಮರಾ ಹಿಡಿದು ಆತನ ಒಂದು ಚಿತ್ರವನ್ನಾದರೂ ಸೆರೆ ಹಿಡಿಯಲು ಕಾತುರನಾಗಿದ್ದೆ. ರಾಜ ಕುಮಾರ ಅಂದ ಮೇಲೆ ಸಾಕಷ್ಟು ಸೆಕ್ಯೂರಿಟಿ ಇತ್ತಾದರೂ ಈಗಿನಷ್ಟು ಇರಲಿಲ್ಲ. ಆದರೂ ನಿಯಮಾವಳಿಗಳ (protocol) ಪ್ರಕಾರ ಫ್ಲಾಷ್ ಫೋಟೋಗೆ ಕಡ್ಡಾಯವಾಗಿ ನಿಷೇಧ. ಅದು ನನಗೆ ಸ್ವಲ್ಪ ನಿರಾಶೆಯನ್ನುಂಟು ಮಾಡಿದರೂ ನನ್ನ ಅದೃಷ್ಟವನ್ನು ಪರೀಕ್ಷಿಸಲು
ಸಿದ್ಧನಾದೆ.

ನನಗೂ ಫೋಟೋಗ್ರಾಫಿಗೂ ಅಂಟಿದ ನಂಟು ...
ಎಲಿಝಬೆತ್ ರಾಣಿ ಪಟ್ಟಕ್ಕೆ ಬಂದಾಗ ನಾವು ಊಟಿಯಲ್ಲಿ ವಾಸಿಸುತ್ತಿದ್ದೆವು. ಆಗ ನನಗೆ ಆರುವರ್ಷ, ನನ್ನ ಅಣ್ಣನಿಗೆ ಎಂಟು
ವರ್ಷ ವಯಸ್ಸಿರಬಹುದು. ನಮಗೆ ಮೊದಲಿನಿಂದಲೂ ಫೋಟೋ ತೆಗೆಯ ಬೇಕೆಂದು ತವಕ. ನನ್ನಣ್ಣ ಮತ್ತು ನಾನು ತಂದೆಯವರಿಗೆ
ಕಾಡಿ, ಬೇಡಿ ಒಂದು ಫುಲ್ ವ್ಯೂ ಕ್ಯಾಮರವನ್ನು ಅದೇ ಸಮಯಕ್ಕೆ ಗಿಟ್ಟಿಸಿದ್ದೆವು. ಆಗ ಬ್ಲಾಕ್ ಅಂಡ ವೈಟ್ ಫೋಟೊ ತೆಗೆದು,
ಊರಲ್ಲಿದ್ದ ಒಂದೇ ಸ್ಟೂಡಿಯೋಗೆ ಕೊಟ್ಟು, ’ತೊಳೆಸಿ’ ಪ್ರಿಂಟ್ ಮಾಡಿಸಿದ ನೆನಪು ಇನ್ನೂ ಹಸಿರಾಗಿದೆ. ಆಮೇಲೆ ಕಾಲೇಜಿಗೆ
ಬಂದಾಗ ನನ್ನ ಮಿತ್ರನೊಡನೆ ಸೇರಿ ನಾವೇ ಪ್ರಿಂಟ್ ಮಾಡಿದ್ದೂ ಇದೆ. ನಂತರ ಈಗ ಡಿಜಿಟಲ್ ಯುಗ ಬಂದಾಗಿನಿಂದ ಎಲ್ಲರಂತೆ
ನಾನೂ ಒಬ್ಬ ಡೇವಿಡ್ ಬೇಯ್ಲಿ, ಅಥವಾ ಕ್ರಿಸ್ ಜಾಕ್ಸನ್ ಅನ್ನುವ ಭ್ರಮೆಯಲ್ಲಿದ್ದೇನೆ!

ಲೈಬ್ರರಿಯಲ್ಲಿ ರಾಜನ ಭೇಟಿ
ಇಂಗ್ಲಿಷ್ ನಿಘಂಟು ಬರೆದು ಪ್ರಸಿದ್ಧರಾದ ಡಾ ಸಾಮ್ಯುಎಲ್ ಜಾನ್ಸನ್ ಅವರನ್ನು ಮೂರನೆಯ ಜಾರ್ಜ್ ಅವರು ತಮ್ಮ
ಇಚ್ಛೆಯಂತೆ ರಾಣಿಯ ಲೈಬ್ರರಿಯಲ್ಲಿ 1767 ರಲ್ಲಿ ಭೆಟ್ಟಿಯಾಗಿದ್ದರು ಅಂತ ಓದಿದ ನೆನಪು. ಅದನ್ನೇ ನೆನಪಿಸುವ ಅಂದಿನ
ಘಟನೆ. ಆಗ ನಾನು ಅದೇ ಆಸ್ಪತ್ರೆಯಲ್ಲಿ ಕನ್ಸಲ್ಟಂಟ್ ಆಗಿ ಕೆಲಸ ಮಾಡುತ್ತಿದ್ದ ಡಾ ಲಾಲಾ ಎನ್ನುವ ಕಣ್ಣಿನ ತಜ್ಞರ ಕೆಳಗೆ ಕೆಲಸ
ಮಾಡುತ್ತಿದ್ದೆ. ಅವರು ಆ ದಿನ ಆಗ ಪ್ರಿನ್ಸ್ ಎಂದೇ ಕರೆಯಲಾಗುತ್ತಿದ್ದ ಚಾರ್ಲ್ಸ್ ಅವರನ್ನು ಭೇಟಿ ಮಾಡಲು ಇಚ್ಛಿಸಿದ್ದರು.
ಅದಕ್ಕೆ ಆಸ್ಪತ್ರೆಯ ಅಧಿಕಾರಿಗಳೂ ಒಪ್ಪಿದ್ದರು. ಅವರ ಜೊತೆಗೆ ನಾನೂ ಸೇರಿಕೊಳ್ಳಲೇ ಎಂದು ಹೊಂಚು ಹಾಕಿದ್ದು ಫಲಿಸಲಿಲ್ಲ.
ಪ್ರೋಟೋಕಾಲ್ ಅಂತ ಅಧಿಕಾರಿಗಳು ಅದೇ ಕೋಣೆಯಲ್ಲಿರಲು ಸಮ್ಮತಿಸಲಿಲ್ಲ.

ಅಂತೂ ಸಿಕ್ಕಿತು ಅವಕಾಶ
ನಂತರ ಹಿಸ್ ರಾಯಲ್ ಹೈನೆಸ್ ಪ್ರಿನ್ಸ್ ಚಾರ್ಲ್ಸ್ ’ತಮ್ಮ’ ಹೆಸರಿನ ಆಸ್ಪತ್ರೆಯ ವಿವಿಧ ಭಾಗಗಳಿಗೆ ಭೇಟಿಕೊಡಲು ಸುತ್ತಿತ್ತುರುವಾಗ ಅವರ ಹಿಂದೆ ’ಆಂಟೂರಾಜ್’ ಜೊತೆಗೆ ಸೇರಿಕೊಂಡು ಒಂದು ಕೋಣೆಯಲ್ಲಿ ಕೆಲವು ಡಾಕ್ಟರರು ಮತ್ತು ನರ್ಸ್ಗಳು ಸಾಲಾಗಿ ನಿಂತಿದ್ದನ್ನು ನೋಡಿ, ಅವರ ಹಿಂದಿನ ಸಾಲಿನಲ್ಲಿ ಆಯಕಟ್ಟಿನ ಸ್ಥಳದಲ್ಲಿ ನಿಂತುಕೊಂಡೆ. ನಮ್ಮ ಎದುರಿಗೆ ಮೂರೇ ಅಡಿ ದೂರದಲ್ಲಿ ಒಬ್ಬೊಬ್ಬರನ್ನಾಗಿ ವಿಚಾರಿಸುತ್ತ ಮಾತಾಡಿಸುತ್ತ ಬಂದ ಚಾರ್ಲ್ಸ್ ಅವರನ್ನು ಫೋಕಸ್ ಮಾಡಿ ತಲೆ ಮತ್ತು ಭುಜಗಳು (head and shoulder) ಇಷ್ಟೇ ಕಾಣಿಸುವಂಥ ನಾಲ್ಕೈದು ’ಪೋರ್ಟ್ರೇಟ್’ ಫೋಟೋಗಳನ್ನು ಕ್ಲಿಕ್ಕಿಸಿದೆ. ಆಗ ಡಿಜಿಟಲ್ ಕ್ಯಾಮರಾಗಳ ಆವಿಷ್ಕಾರ ಆಗಿದ್ದಿಲ್ಲ. ನೆಗೆಟಿವ್ ಗಾಗಿ ಫಿಲ್ಮ್ ಗಳನ್ನು ಕಂಪನಿಗೆ ಕಳಿಸಿ ಪೋಸ್ಟಿನಲ್ಲಿ ಪ್ರಿಂಟ್ ಬರುವ ವರೆಗೆ ಪ್ರಸೂತಿ ವೇದನೆ! ಎರಡು ವಾರಗಳ ನಂತರ ಪೋಸ್ಟ್ಮನ್ ಬಂದಾಗ ’ಹೆಣ್ಣೋ ಗಂಡೋ’ ಅಂತ ಕುತೂಹಲದಿಂದ ಮತ್ತು ಅವಸರದಿಂದ ಕವರನ್ನು ಬಿಚ್ಚಿ ನೋಡಿದೆ. ಫ್ಲಾಷ್ ಇಲ್ಲ ಅಂತ  1/15 ಸೆಕೆಂಡುಗಳ ಎಕ್ಸ್ ಪೋಶರ್ ಕೊಟ್ಟಿದ್ದೆ.  ಒಂದೇ ಒಂದು ಫೋಟೋ ಮಾತ್ರ ಅವರದೇ ಅನ್ನುವಷ್ಟಾದರೂ ಸ್ಪಷ್ಟವಾಗಿ ಕಾಣಿಸುವಂತಿತ್ತು. ನನಗೆ ಸ್ವರ್ಗ ಮೂರೇ ಗೇಣು! ಒಂದು ಕಾಲದಲ್ಲಿ ಆತ ಕಿಂಗ್ ಆಗುವ ದಿನವನ್ನೇ ಕಾಯುತ್ತಿದ್ದೇನೆ ಇಂದಿನ ವರೆಗೆ! ಇನ್ನುಳಿದ snaps ಕುದುರೆ ರೇಸಿನಲ್ಲಿ ಹೇಳುವಂತೆ 'also ran' ಅನ್ನುವ ಲೆಕ್ಕಕ್ಕಿಲ್ಲದವು! ಹೋಗಲಿ ಬಿಡಿ. ಆ ‘ಐತಿಹಾಸಿಕ' ಫೋಟೋ ಬಲಗಡೆ ಕೊಟ್ಟಿದೆ, ನಿಮಗಾಗಿ!(Credit: Monochrome editing by Nigel Burkinshaw)
ರೈಟ್ ರಾಯಲ್ ಖುಶಿ!
 ಆ ಫೋಟೋವನ್ನು ಎನ್ಲಾರ್ಜ್ ಮಾಡಿಸಿ, ಪೋಸ್ಟರ್ ಮಾಡಿಸಿ ನನ್ನ ಡಿಪಾರ್ಟ್ಮೆಂಟಿನಲ್ಲಿ ಇಟ್ಟಿದ್ದೆ. 1978 ರಲ್ಲಿ ಆ ಊರು ಬಿಟ್ಟು ಬಂದೆ. ಈಗ ಆ ದೊಡ್ಡ ಫೋಟೋದ ಗತಿ ಏನಾಯಿತು ಗೊತ್ತಿಲ್ಲ. ಆ ನೆಗಟಿವ್ ಮಾತ್ರ ಇನ್ನೂ ನನ್ನ ಹತ್ತಿರ ಇದೆ. ರಾಯಲ್ ಗ್ರಾಂಟ್ ಅಂತ ಒಂದು ’ಪದವಿ’ ಸಿಗುವದು ಅಷ್ಟು ಸುಲಭವಲ್ಲ. ಆ ಫೋಟೋದ ಒಂದು ಪ್ರತಿಯನ್ನು ’ಬಕ್ಕಿಂಗ್ ಹ್ಯಾಮ್ ಪ್ಯಾಲೇಸ್’ ಲಂಡನ್ ಅಂತ ಹೆಮ್ಮೆಯಿಂದ ಕಳಿಸಿದ್ದು ಏನಾಯಿತೋ ಗೊತ್ತಿಲ್ಲ. ಆದರೆ ಈ ವರ್ಷದ ವರೆಗೆ ಕಾಯ್ದಿದ್ದ ನನಗೆ ಆ ಫೋಟೋ ಕ್ಲಿಕ್ಕಿಸಿದ ದಿನವನ್ನು ನೆನೆದು ಮೈ ಪುಳಕಿತವಾಗುತ್ತಿದೆ!  ನನ್ನ ಅತ್ಯಂತ ಅದೃಷ್ಟದ ಫೋಟೋ ಅದು ಅಂತ ನೀವೂ ಒಪ್ಪ ಬಹುದೆಂದು ಊಹಿಸುತ್ತೇನೆ! ಅದಕ್ಕೆ ನನ್ನ ಕಾಪಿರೈಟಿದೆ, ಎಚ್ಚರಿಕೆ!

ಶ್ರೀವತ್ಸ ದೇಸಾಯಿ
ಡೋಂಕಾಸ್ಟರ್, ಯಾರ್ಕ್ ಶೈರ್, ಯು ಕೆ.
  (ಫೋಟೋಗಳೆಲ್ಲ ಲೇಖಕರು ಕ್ಲಿಕ್ಕಿಸಿದ್ದು. Copyright reserved.)
  (ಇದೇ ವಾರದ ಕನ್ನಡ ಪ್ರಭ ಎನ್ ಆರ್ ಐ ಆವೃತ್ತಿಯಲ್ಲಿ ಪ್ರಕಟವಾದ ನನ್ನ ಲೇಖನದ  ಪರಿಷ್ಕೃತ ರೂಪ) 

**********************************************************

ಶ್ರೀಮತಿ ಮೈದಾಸ – ಗೌರಿ ಪ್ರಸನ್ನ

ಐನೂರು ಆವೃತ್ತಿ ದಾಟಿದ ಅನಿವಾಸಿಯ ಬ್ಲಾಗಿಗೆ ಮತ್ತೊಮ್ಮೆ ನಿಮಗೆಲ್ಲ ಸ್ವಾಗತ, ನಮಸ್ಕಾರಗಳೊಂದಿಗೆ. ಇವತ್ತಿನ ಅಂಚೆಯಲ್ಲಿ ಶ್ರೀಮತಿ ಗೌರಿ ಪ್ರಸನ್ನ ಬರೆದ “ಶ್ರೀಮತಿ ಮೈದಾಸ” ಅನ್ನುವ ಕವನವಿದೆ. ಅವರೇ ಹೇಳಿರುವಂತೆ, ಇದು ಇಂಗ್ಲೀಷಿನ “Carol Ann Duffy ಯವರ Mrs Maidas ನಿಂದ ಪ್ರೇರಿತ. ಅದರ ಭಾಷಾಂತರವೋ, ಭಾವಾನುವಾದವೋ ಖಂಡಿತ ಅಲ್ಲ. A level ನಲ್ಲಿ English literature ಕಲಿಯುತ್ತಿರುವ ಮಗಳು ಅಕ್ಷತಾ ಕೆಲ ದಿನಗಳ ಹಿಂದೆ ತನ್ನ syllabus ನಲ್ಲಿರುವ ಈ ಹಾಡಿನ ಬಗ್ಗೆ ಮಾತಾಡಿದ್ದೇ ತಡ. Mrs.Maidas ಮನದಲ್ಲಿ ಗಟ್ಟಿಯಾಗಿ ನಿಂದು ತಲೆ ತಿನ್ನಲಾರಂಭಿಸಿದ್ದೇ ಈ ಪ್ರಯತ್ನದ ನಾಂದಿ.” ವ್ಯಾಲೆಂಟೈನ್ ದಿವಸ ಹತ್ತಿರ ಬಂದಂತೆ, ಸ್ವಲ್ಪ ಪ್ರೇಮಿಗಳ / ಪ್ರೇಮಕಾವ್ಯಗಳ ಹಾವಳಿ ಸಹಜವಾಗಿಯೇ ಹೆಚ್ಚಾಗುತ್ತದೆ. ಆದರೆ ಇಲ್ಲಿ, ಮುಟ್ಟಿದ್ದೆಲ್ಲ ಬಂಗಾರ ಮಾಡುವ ಇನಿಯನ ಪ್ರಿಯೆಯ ಕಷ್ಟಗಳ ಅಳಲಿದೆ, ಹತ್ತಿರವಿದ್ದೂ ಕೈಹಿಡಿಯಲಾಗದ ಪರಿಸ್ಥಿತಿಯ ಸಂಕಟವಿದೆ. ಬನ್ನಿ, ಓದೋಣ, ಓದಿ ನಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳೋಣ. – ಲಕ್ಷ್ಮೀನಾರಾಯಣ ಗುಡೂರ (ವಾರದ ಸಂಪಾದಕ).

ಜೂನ್ ತಿಂಗಳ ಮೊದಲ ಮುಂಗಾರು ಮಳೆ.. 
ಬಿದ್ದ ತಟಪಟ ಹನಿಗೆ ತೊಯ್ದು ತುಟಿದೆರೆದ ಇಳೆ..
ಬೆಳ್ಳನೆ ತಟ್ಟೆ ಇಡ್ಲಿಯ ನಸು ಬೆಚ್ಚನೆಯ ಹಬೆ, ಚಟ್ನಿಗೆಂದು ಕಾಸಿದ ಇಂಗು-ಕರಿಬೇವಿನೊಗ್ಗರಣೆಯ ಘಮ,ಕುದಿಯುತ್ತಿರುವ ಚಹಾದ ತುಸು ಕಹಿ ಒಗರು..ತಾಟು, ಬಟ್ಟಲು, ಚಮಚೆ,ಲೋಟ,ಕಪ್ ಗಳ, ಹೆಚ್ಚಿಟ್ಟ ಅರ್ಧ ನಿಂಬೆ, ಕರಿಬೇವ ಕಡ್ಡಿಗಳ.. ಸಂತೆಯ ಮಾಳ ನನ್ನ ಅಡುಗೆ ಕಟ್ಟೆ..
ತುಂಬು ಸಜೀವತೆಯ ಪ್ರತೀಕ..
ಪ್ರೀತಿ - ರೀತಿಗಳ ನಿತ್ಯಸತ್ಯ ಲೋಕ

ಅಡರಿದ್ದ ಮಿಶ್ರ ಘಮಟು ಹೊರಹೋಗಲನುವಾಗಲೆಂದು
ತುಸುದೆರೆದ ಕಿಟಕಿಯ ಇನ್ನಷ್ಟು ತೆರೆದೆ..
ನಮ್ಮನೆ ಪುಟ್ಟ ಕೈ ತೋಟದಲಿ .. ಅದೋ .ನನ್ನ ಮೈದಾಸ,ಜೀವದ ಜೀವ.. ನನ್ನೊಲವು..
ನಾವೇ ನೆಟ್ಟ ಮಲ್ಲಿಗೆಯ ಬಳ್ಳಿಗೀಗ ಮೈತುಂಬ ಹೂವು..
ಟೊಂಗೆ ಟೊಂಗೆಯಲಿ ತೂಗುತಿದೆ ಗಿಣಿ ಕಡಿದ ಗಿಣಿಮೂತಿ ಮಾವು
ಗಿಡಗಂಟೆಗಳ ಕೊರಳಲ್ಲಿ ಗುಬ್ಬಚ್ಚಿ ಮರಿಯ ಚೀಂವ್ ಚೀಂವು..
ಅರೇ! ಇದೇನಿದು!!..

ಮಾವು ಕೀಳಲೆಂದು ಅವ ಬಗ್ಗಿಸಿದ ಟೊಂಗೆಯ ಎಲೆಯ ಹಸಿರೊಮ್ಮೆಗೇ ಪೀತ ವರ್ಣ.ಕಿತ್ತ ಬಿಳಿಯ ಮಲ್ಲಿಗೆಗೆ ಬಂಗಾರ ಬಣ್ಣ
‘ಸುವರ್ಣ ಪುಷ್ಪ ದಕ್ಷಿಣಾಂ ಸಮರ್ಪಯಾಮಿ’ ಮಂತ್ರದನುರಣ

ಅರೇ,ಇದೇನಿದು ಅಂಗೈಲ್ಹಿಡಿದ ಮಾವಿಗೂ ನೂರು ಕ್ಯಾಂಡಲ್ ಬಲ್ಬ್ ಪ್ರಭೆ..
ಅನತಿ ದೂರದಿಂದಲೂ ಕಂಡ ಅವನ ವಿಜಯದ ನಗೆಗೆ ನಾನು ಅಪ್ರತಿಭ
ಪುಟ್ಟ ತೋಟದ ಕಟ್ಟಿಗೆಯ ಗೇಟು ದೂಡಿದನಷ್ಟೇ..ಅದೂ ಚಿನ್ನದಂತೆ ಥಳಥಳ..

ದಣಿದ ದೇಹ ಚೆಲ್ಲಿ ಅವ ಕೂತ ಹಾಲ್ ನ ಹಳೆಯ ಕಂದು ಈಸಿ ಚೇರ್ ಬಟ್ಟೆ .. ಕ್ಷಣ ಮಾತ್ರದಲಿ ಹೊಂಬಣ್ಣದ ಪಟ್ಟೆ.

ಮೆತ್ತಗಿನ ಮೃದು ಇಡ್ಲಿಗೆ ಅವನ ಕೈ ಸೋಕಿತಷ್ಟೇ..ಅದುವೂ ಇದೀಗ ಹಳದಿ ಲೋಹದ ಮುದ್ದೆ.

‘ಓಹ್! ದೇವರೇ’ ನಿಡುಸುಯ್ದ ಅವನ ಮೊಗದ ತುಂಬ ಕಳವಳ
‘ಇದೇನಾಗುತಿದೆ?’ ನನ್ನೆದೆಯ ಗೂಡಲ್ಲೂ ಭಯ, ಆತಂಕ,ತಳಮಳ
ಅಳುಕುತ್ತಲೇ ಮುಟ್ಟಿದ ಚೀನೀಮಣ್ಣಿನ ಕಪ್ ನ ಚಹಾ ತಾನಾಯಿತು
ಕ್ಷಣಾರ್ಧದಲೇ ಕನಕ ಭೂಷಿತ ಹಿಡಿಯ ಕಪ್ಪಿನ ಹಳದಿದ್ರವ

‘ನಿಲ್ಲು, ಹಿಂದೆ ಸರಿ. ಮುಟ್ಟದಿರು ನನ್ನ’- ಚೀರಿದ.
ನನ್ನ ಕೈಕಾಲೆಲ್ಲ ನಡುಕ, ಕಣ್ಣು ಕತ್ತಲೆ.. ಕುಸಿದೆ
‘ಮ್ಯಾಂವ್ ಎಂದು ಒಡೆಯನ ತೊಡೆಯೇರ ಬಂದ ಟಾಮಿಯ ಕಂಡೆ..ಧಡಕ್ಕನೆದ್ದೆ – ಕೊಠಡಿಯಲಿ ಕೂಡಿ ಕೊಂಡಿ ಜಡಿದೆ.

ಕೊಪ್ಪರಿಗೆಯೋ, ಕೊಳಗವೋ, ಕ್ವಿಂಟಲ್ಲೋ ಬೇಡಿದರಾಗುತ್ತಿರಲಿಲ್ಲವೇ?
ಬೇಡುವವ ಮೂರ್ಖನಾದರೇನಂತೆ ನೀಡುವವಗಾದರೂ ಬುದ್ಧಿ ಬೇಡವೇ?
‘ಮುಟ್ಟಿದ್ದೆಲ್ಲ ಚಿನ್ನ’ವಾಗಿಸುವ ದುರಾಸೆ ಏಕೆ ಬೇಕಿತ್ತು?
ಗೆರೆ ದಾಟಿದ ಮೇಲಷ್ಟೇ ಅರಿವಾಗುವುದಲ್ಲವೇ ಆಪತ್ತು?

‘ಅತ್ಯಾಸೆ ಗತಿಗೇಡೆಂದು ದೃಷ್ಟಾಂತ ಕೊಡುತ್ತದೆ ಜಗತ್ತು
ಇರಲಿಲ್ಲವೇನು ಹಲಕೆಲವು ಅನಿವಾರ್ಯತೆ – ಜರೂರತ್ತು
ಬಣ್ಣ ಬೇಡುವ ಗೋಡೆ, ಬಳಕೆಗೊಂದು ಗಾಡಿ, ದುರಸ್ತಿಗೆ ಬಂದ ಛತ್ತು
‘ನನ್ನದೇನೂ ತಪ್ಪಿಲ್ಲ’ – ಅನ್ನಲಾರೆ ಖಂಡಿತ.ಮದುವೆ ಛತ್ರದಲ್ಲೋ, ಹಬ್ಬ ಸಮಾರಂಭದಲೋ ಕಂಡು ಓರಗೆಯವರ ಸೀರೆ,ಒಡವೆ, ದೌಲತ್ತು..
ನಾನೂ ರಗಳೆ ಮಾಡಿ ಮಾಡಿ ಅವನ ಕಂಗೆಡಿಸಿದ್ದಿದೆ ಕಿಂಚಿತ್ತು

ಅವನಿಗೀಗ ಚಿನ್ನದ್ಹಾಸಿಗೆಯಲಿ ನಿದ್ದೆಯಿಲ್ಲದ ಹೊರಳಾಟ
ಇನಿಯನಪ್ಪುಗೆಯಿಲ್ಲದ ಸುಪ್ಪತ್ತಿಗೆಯಲ್ಲಿ ನನ್ನ ಗೋಳಾಟ
ನಲ್ಲನಪ್ಪುಗೆಗೆ ಕಾಡುವ ದೇಹ-ಮನ-ಆತ್ಮಗಳ ಸಂಭಾಳಿಸಲಾಗದೇ ಒದ್ದಾಡುತ್ತಿದ್ದೇನೆ.
ಶಾಪ, ಅಭಿಶಾಪಗಳಂತಿರಲಿ.. ವರವೂ ಹೀಗೆ ಶಾಪವಾಗುವ ಪರಿಗೆ ಕಂಗಾಲಾಗಿದ್ದೇನೆ.

ಬಲುಬಾರಿ ಅನ್ನಿಸುವುದುಂಟು.. ಏನಾದರಾಗಲಿ, ಒಮ್ಮೆ ಅವನ ಬಿಗಿದಪ್ಪಿ ಪುತ್ಥಳಿಯಾಗಿ ಕುಳಿತುಬಿಡಲೇ ಪಕ್ಕದಲೆ
ಎಲ್ಲ ತೊಳಲಾಟ, ನರಳಾಟ, ನೋವು, ಹಿಂಸೆಗಳಿಗೆ ಮಂಗಳ ಹಾಡಿಬಿಡಲೇ?

ಛೇ!ಛೇ!! ಈ ಆಪತ್ತಿನ ಸಮಯದಲಿ ಇಂಥ ಸ್ವಾರ್ಥಿಯಾಗಲಾರೆ.
ನಮ್ಮೊಲವ ಸಾಂಗತ್ಯ, ಸಿಹಿಕಹಿ ದಾಂಪತ್ಯ ತೊರೆಯಲಾರೆ
ಕಣ್ಣಿನಲೇ ಅವನ ಮುಟ್ಟಿ, ಮೈದಡವಿ ಸಂತೈಸದಿರಲಾರೆ
ಧರ್ಮೇಚ-ಅರ್ಥೇಚ-ಕಾಮೇಚ.. ಕೊಟ್ಟ ವಚನ ನಿಭಾಯಿಸದಿರಲಾರೆ.


- ಗೌರಿ ಪ್ರಸನ್ನ

*************************************