ಹೊರನಾಡಿನ ಕನ್ನಡಿಗರು:  ಅಜ್ಜಿ – ಮೊಮ್ಮಗಳ ಸಂವಾದ; ವತ್ಸಲಾ ರಾಮಮೂರ್ತಿ ಬರೆದ ಲೇಖನ

ಸಮಸುಖಿ (ಸಮದುಃಖಿ) ಕನ್ನಡಿಗರಿಗೆ ಸಬ್ಸ್ಟಿಟ್ಯೂಟ್ ಸಂಪಾದಕನ ನಮಸ್ಕಾರಗಳು.  ಕೆಳಗೆ ಬರೆದಿರುವ ಸಂವಾದ ಬರಿಯ ಲೇಖಕಿಯದಲ್ಲ, ಅದು ನಮ್ಮಲ್ಲಿ ಅನೇಕರ ಜೀವನದಲ್ಲಿ ಒಮ್ಮೆ ಬರಬಹುದಾದ ಘಳಿಗೆ.  ಇದು ಬರಿಯ ಕನ್ನಡಿಗರಿಗೆ ಮಾತ್ರವಲ್ಲ, ಯಾವ ವಲಸಿಗರಿಗೂ ಬರಬಹುದಾದ ಪ್ರಶ್ನೆ. ಓದಿ, ನಿಮ್ಮ ಸ್ವಂತದ ಅಥವಾ ಕೇಳಿದ / ನೋಡಿದ ಅನುಭವವೇನಾದರೂ ಇದ್ದರೆ, ಹಂಚಿಕೊಳ್ಳಿ - ಸಂ. 
*****************************************
ನನ್ನ  ಮೊಮ್ಮಗಳು ನನ್ನನ್ನು ಒಂದು question ಕೇಳಿದಳು “ಅಜ್ಜಿ ನಾನು ಯಾರು? ನೀನು ಎಲ್ಲಿಂದ ಬಂದೆ?  ಯಾಕೆ ಬಂದಿ?”
ಅವಳಿಗೆ ಕೂಡಲೆ ಉತ್ತರ ಕೊಡಲು ಹೊಳೆಯಲ್ಲಿಲ್ಲ.  ತುಸು ತಡೆದು “ಮೊಮ್ಮಗಳೇ, ನಮ್ಮ ಚರಿತ್ರೆಯನ್ನು ಕೇಳುವಂತವಳಾಗು.”
“ಹಾಗಾದರೆ ಅಜ್ಜಮ್ಮ, ನಿಮ್ಮ ಊರು, ಸಂಸ್ಕೃತಿಯನ್ನು ವಿವರವಾಗಿ ತಿಳಿಸು” ಎಂಬುದಾಗಿ ಕೇಳಲು, ಕೆಳ ಕಂಡ ಕತೆ ಹೇಳಿದೆ.
“ನಾವು ಹೊರನಾಡಿನ ಕನ್ನಡಿಗರು.  ನಾವು ವಲಸೆ ಬಂದವರು.”

“ಹಾಗಾದರೆ ಬೆಂಗಳೂರಿನಿಂದ ಮುಂಬಯಿ, ಚೆನ್ನೈ ಮುಂತಾದ ಪ್ರದೇಶಕ್ಕೆ ಹೋಗುತ್ತಾರಲ್ಲ? ಅವರೆಲ್ಲಾ ವಲಸೆ ಹೋದವರೇ?”
“ಹೌದು ಬಂಗಾರಿ, ಅವರೊಬ್ಬರೇ ಅಲ್ಲ.  ಅಮೆರಿಕ, ಇಂಗ್ಲಂಡ್‌, ಇನ್ನೂ ಬೇರೆ  ಬೇರೆ ದೇಶಕ್ಕೆ ನಮ್ಮ ಕನ್ನಡನಾಡಿನಿಂದ ಹೋದವರೆಲ್ಲಾ ವಲಸೆ ಹೋದವರೇ.” 
“ಪರದೇಶಕ್ಕೆ ಕೆಲಸ ಹುಡಿಕಿಕೊಂಡು ಬಂದವರೇ ಹೆಚ್ಚು. ಕೆಲಸ ಸಿಕ್ಕಿದ ಮೇಲೆ ಮನೆ, ಸಂಸಾರ ಎಲ್ಲಾ ಮಾಡಿಯಾಯಿತು.”

“ಹಾಗಾದರೆ ನೀವೆಲ್ಲಾ ಸಂತೋಷವಾಗಿ ಇದ್ದೀರಾ?  ನಿಮಗೆ ನಿಮ್ಮ ಭಾಷೆ, ಪರಂಪರೆ, ಚರಿತ್ರೆ, ಹಬ್ಬ-ಹುಣ್ಣಿಮೆಗಳು ಮಿಸ್ಸಾಗುತ್ತಾ?” ಎಂದು ಕೇಳಿದಳು.
“ಹೌದು ಕಣೆ ಖಂಡಿತವಾಗಲೂ ಮಿಸ್ಸಾಗುತ್ತದೆ.  ವಲಸೆ ಬಂದವರು ತುಂಬಾ ಜನ ಒಳ್ಳೆಯ ಕೆಲಸ, ಹಣ ಸಂಪಾದನೆ ಮಾಡಿ ಗೌರವಾಗಿ ಬಾಳುತ್ತಿದ್ದಾರೆ.  ಆದರೆ ನಮಗೆ ನಮ್ಮದು, ನಮ್ಮ ಬಾಲ್ಯದ ಅನುಭವಗಳನ್ನು ಮರೆಯಲು ಸಾಧ್ಯವೇ?  ನಮ್ಮ ಪರಂಪರೆ, ನಮ್ಮ ಭಾವನೆಗಳನ್ನು ಅಳಿಸಲು ಸಾಧ್ಯವೇ?  ಅದೇ ಅಲ್ಲವೇ ನಮ್ಮ ವ್ಯಕ್ತಿತ್ವಕ್ಕೆ ಅಡಿಪಾಯ.  ಅಡಿಪಾಯವನ್ನು ಮುರಿಯಲು ಸಾಧ್ಯವೇ?  ಮುರಿದರೆ ನಮ್ಮ ಬದುಕು ಬರಡಲ್ಲವೇ, ನಮ್ಮ ವ್ಯಕ್ತಿತ್ವ ಒಂದು ದೊಡ್ಡ ಅಂಶವನ್ನ ಕಳೆದ ಹಾಗಲ್ಲವೇ?”

ಮತ್ತೊಂದು ಸವಾಲು – “ನಿಮಗೆ ಕನ್ನಡ ಬಳಗ ಯಾಕೆ ಬೇಕು?”
“ನಮ್ಮ ವ್ಯಕ್ತಿತ್ವದ ಅಡಿಪಾಯಕ್ಕೆ ಆಸರೆ ಬೇಡವೇ?  ನಾವು ಒಂದು ಸಂಘದಲ್ಲಿಯಿದ್ದೇವೆ.  ನಾವು ಭಾಷೆ, ಚರಿತ್ರೆ, ವಾತ್ಯಲ್ಯ ಮುಂತಾದ ಮಾನವೀಯ ಗುಣಗಳನ್ನು ಹಂಚಿಕೊಳ್ಳುತ್ತೇವೆ.  ಈ ಹೊರನಾಡಿನ ಸಂಘಗಳು ನಮ್ಮ ವ್ಯಕ್ತಿತ್ವಕ್ಕೆ ಒಂದು meaning ಕೊಡುತ್ತದೆ.  ನಾವು ವಲಸೆ ಬಂದ ದೇಶಕ್ಕೆ ಹೊಂದಿಕೊಂಡರೂ, ಈ ಹೊರನಾಡು ನಮ್ಮದು ಎನಿಸಲು ಕಷ್ಷ ಅನಿಸುತ್ತದೆ.  ನಮಗೆ chipsಗಿಂತ ಕೋಡುಬಳೆ ರುಚಿಯಲ್ಲವೇ?”

ಮತ್ತೊಂದು ಕ್ವೆಶ್ಚನ್ನು – “ಸರಿ ಇಲ್ಲಿಗೆ ಬಂದಿರಿ. ನಿಮ್ಮ ಜೀವನ ಕಟ್ಟಿದಿರಿ. ಮಕ್ಕಳು, ಮರಿಗಳಾದವು.  ನಮ್ಮ ವಂಶ ಬೆಳೆಯುತ್ತಿದೆ.
ಈಗ ನಾವು ೩ನೆ ಜನರೇಶನ್ನು.  ಮೊದಲನೆಯದು ನೀವು; ಹೊರನಾಡಿಗೆ ಬಂದು ನಿಮ್ಮ ಭಾಷೆ, ಸಂಸ್ಕೃತಿ ಬೆಳಿಸಿ, ಉಳಿಸಿಕೊಂಡಿರಿ.

“ಎರಡನೆ ಜನಾಂಗ ನಿಮ್ಮ ಮಕ್ಕಳು. ನನ್ನ ತಂದೆ-ತಾಯಿಯರು. ಇಲ್ಲೇ ಹುಟ್ಟಿ ಬೆಳದವರು.  ಅವರು ನಿಮ್ಮ ಅಡುಗೆ ತಿಂಡಿ ಎಲ್ಲ ಮಜವಾಗಿ ತಿನ್ನುತ್ತಾರೆ. ಮನೆಯಲ್ಲಿ ನಿಮ್ಮ ಮಾತು ಕೇಳಬಹುದು. ಮನೆಯ ಹೊರಗೆ ಅವರು ಈ ದೇಶದ ಜನರನ್ನೇ ಅನುಸರಿಸುತ್ತಾರೆ.  ಕನ್ನಡ ಮಾತನಾಡಲು ಬರುವುದಿಲ್ಲ.  ಚಿಕ್ಕವರಾಗಿದ್ದಾಗ ಕನ್ನಡ ಕಲಿಯಲು ನೀವು ಸಹಾಯಮಾಡಲಿಲ್ಲ. ಅವರು ಕುವೆಂಪು, ದ ರಾ ಬೇಂದ್ರೆಯಂಥವರ ಹೆಸರು ಕೇಳಿಲ್ಲ.  ಅವರಿಗೆ ನಿಮಗೆ ಇರುವಷ್ಟು ಮಮತೆ ನಿಮ್ಮ ಪರಂಪರೆ ಮೇಲೆ ಖಂಡಿತಯಿಲ್ಲ.  ಅವರು ಕನ್ನಡ ಬಳಗಕ್ಕೆ ಬರುವುದಿಲ್ಲ.  ಬಂದರೂ, ‘we don’t understand anything’ ಅಂತಾರೆ.

ಮೂರನೆಯ ಜನಾಂಗ ನಿಮ್ಮ ಮೊಮ್ಮಕ್ಕಳು. ಅವರ ಬಗ್ಗೆ ಮತ್ತೊಂದು ಸವಾಲು.
“ಅಜ್ಜಿ ನಮಗೆ ನಿಮ್ಮ ಭಾಷೆ ಗೊತ್ತಾಗುವುದಿಲ್ಲ.  ಬೆಂಗಳೂರಿಗೆ ಒಂದೇ ಸಲ ಮಮ್ಮಿ ಡ್ಯಾಡಿ ಜತೆ ಹೋಗಿದ್ದೆ.  ಎಲ್ಲರೂ Englishನಲ್ಲೇ ಮಾತಾಡಿದರು.  ಮಮ್ಮಿ ಡ್ಯಾಡಿ ಕನ್ನಡ ಮಾತನಾಡುವುದಿಲ್ಲ.  ಅವರಿಗೆ ಬರಲ್ಲ ಅಂತಾರೆ.  ಹಬ್ಬ, ಹರಿದಿನ ಮಾಡುವುದಿಲ್ಲ.  ನಾವು ಏನು ಮಾಡಬೇಕು?  ಬ್ರಿಟಿಶ್ ಜನರಂತೆ ಇರಬೇಕೆ?”

“ಇದಲ್ಲದೆ ಮತ್ತೊಂದು ಗುಂಪಿದೆ ಈಗ. ಇವರು ಇತ್ತೀಚಿಗೆ ಹೊರನಾಡಿಗೆ ವಲಸೆ ಬಂದವರು.  ಹೊಸ ಟೆಕ್ನಾಲಜಿ ತಿಳಿದವರು. ಅವರೊಡನೆ ನಮ್ಮ ಮೊದಲನೆ ಜನಾಂಗ (ಹಿರಿಯರು, ೩೦-೪೦ವರುಷಗಳಿಂದ ಹೊರನಾಡಿನಲ್ಲಿ ಇರುವವರು) ಬಾಂಧವ್ಯ ಬೆಳಸಲು ಸಾದ್ಯವೇ?”

“ನನ್ನ ಕತೆ ಮುಗಿಯಿತು. ನಿನ್ನ ಸವಾಲಿಗೆ ನನ್ನ ಹತ್ತಿರ ಉತ್ತರವಿಲ್ಲ!”

- ವತ್ಸಲಾ ರಾಮಮೂರ್ತಿ

*****************************************************

ಇಕ್ಕಿಗಾಯ್, ಒಂದು ಪರಿಚಯ – ಶ್ವೇತ ಕಿರಣ್

ಪ್ರಿಯರೇ, ಪ್ರತಿಯೊಂದು ಪ್ರಾಚೀನ ಇತಿಹಾಸವುಳ್ಳ ಸಮಾಜದ ಬಗ್ಗೆ, ಅಲ್ಲಿನ ಜನರ ನಡೆ-ನುಡಿಗಳ, ಜೀವನಶೈಲಿಯ ಬಗ್ಗೆ ಜಗತ್ತಿನ ಉಳಿದ ಭಾಗಗಳ ಜನರ ಕುತೂಹಲ ಸಹಜವಾದದ್ದೇ. ಅದರಲ್ಲೂ, ಅಲ್ಲಿನ ಜನರ ಬದುಕಿನ ಮೇಲೆ ಅ ಶೈಲಿಯ ಪರಿಣಾಮ ಒಳ್ಳೆಯದಾಗಿದ್ದು, ಶತಾಯುಷಿಗಳಾಗಿ ಉತ್ತಮ ಅರೊಗ್ಯದಿಂದ ಬದುಕುತ್ತಿದ್ದರಂತೂ, ಸರಿಯೇ ಸರಿ. ಈ ಬಗ್ಗೆ ಅಭ್ಯಸಿಸುವ, ಬರೆಯುವ ಆಸಕ್ತರ ತಂಡವೇ ಹುಟ್ಟಿಬಿಡುತ್ತದೆ. ಮೆಡಿಟರೇನಿಯನ್ ದೇಶಗಳಾಗಲಿ, ಪೂರ್ವ ಏಶಿಯಾದ ದೇಶಗಳಾಗಲಿ ಅಲ್ಲಿಗೆ ಹೋಗಿ, ನೆಲೆಸಿ, ಜೀವನಕ್ರಮವನ್ನು ಅಭ್ಯಾಸ ಮಾಡಿ, ಅದನ್ನು ಉಳಿದ ಜಗತ್ತಿನೊಂದಿಗೆ ಹಂಚುವ ಪ್ರಯತ್ನದ ಬಗೆಗಿನ ಒಂದು ಇಂತಹುದೇ ಪುಸ್ತಕದ ಪರಿಚಯ ಕೊಡಲಿದ್ದಾರೆ, ಶ್ವೇತ ಕಿರಣ್. ಓದಿ, ನಿಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಿ - ಸಂಪಾದಕ.

ಕಿರುಪರಿಚಯ: ಶ್ವೇತ ಕಿರಣ್: ನಾನು ಮೂಲತಃ ಬೆಂಗಳೂರಿನ ಹುಡುಗಿ. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ನಾನು ಎಂ ಎಸ್ ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿಯನ್ನು ಪೂರ್ಣಗೊಳಿಸಿದೆ. ೨೦೧೦ ನೇ ಇಸವಿಯಿಂದ ನಾನು ಇಂಗ್ಲೆಂಡ್‌ನಲ್ಲಿ ನೆಲಸಿದ್ದೇನೆ. ಕಳೆದ ಕೆಲವು ವರ್ಷಗಳಿಂದ, ನಾನು ಸಾಮಾನ್ಯ ವೈದ್ಯೆಯಾಗಿ (GP) ಆಗಿ ಇಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನು ನನ್ನ ಪತಿ ಹಾಗು ಮಗಳೊಂದಿಗೆ ಲಂಕಾಷೈರಿನ ಒಂದು ಸುಂದರವಾದ ಪುಟ್ಟ ಹಳ್ಳಿಯಲ್ಲಿ ವಾಸಿಸುತ್ತಿದ್ದೇನೆ. ನಾನು ಕೆಲಸದಲ್ಲಿ ಇಲ್ಲದಿರುವಾಗ ಪ್ರಕೃತಿಯ ಮಡಿಲಲ್ಲಿ ಅಥವಾ ಒಳ್ಳೆಯ ಪುಸ್ತಕದಲ್ಲಿ ಮುಳುಗಿರುವುದನ್ನು ನೋಡಬಹುದು. ಇದಲ್ಲದೆ ನೃತ್ಯ, ತೋಟಗಾರಿಕೆ, ವಿವಿಧ ರೀತಿಯ ವ್ಯಾಯಾಮ, ಜೀವನಶೈಲಿ ವಿಧಾನಗಳು- ಇವುಗಳ ಬಗ್ಗೆ ಕೂಡ ಬಹಳ ಆಸಕ್ತಿ ಹೊಂದಿದ್ದೇನೆ.

********************************************************************

೨೦೨೨ ನೇ ವರ್ಷ ಮುಗಿದು ಹೊಸ ವರ್ಷ ಆರಂಭವಾಗಿದೆ. ತಿಳಿದು ತಿಳಿಯದಂತೆ ಕಾಲ ಎಷ್ಟು ವೇಗವಾಗಿ ಸರಿಯುತ್ತಿದೆ ಅಲ್ಲವೇ? ಈಗ ತಾನೆ ೨೦೨೨ ನೇ ವರ್ಷದ ಸಂಕಲ್ಪಗಳನ್ನು ಶುರು ಮಾಡಿದ ಹಾಗಿದೆ. ಆದರೆ ೨೦೨೩ ನೇ ವರ್ಷ ಶುರುವಾಗಿ ಆಗಲೆ ಆರು ತಿಂಗಳು ಕಳೆದಿವೆ. ವರ್ಷಾಂತ್ಯದಲ್ಲಿ ನಾವು ಕಳೆದ ೧೨ ತಿಂಗಳುಗಳ ಬಗ್ಗೆ ಪ್ರತಿಫಲಿಸುತ್ತೇವೆ. ನಾವು ಯಾರು, ಇಲ್ಲಿಗೆ ಬಂದಿರುವ ಉದ್ದೇಶವೇನು? ನಾವು ಏನು ಮಾಡಬೇಕು, ಹೇಗೆ ಬದುಕಬೇಕು, ಜೀವನದ ಅರ್ಥ ಏನು? ಈ ತರಹದ ಪ್ರಶ್ನೆಗಳು ಇಂತಹ ಸಂದರ್ಭದಲ್ಲಿ ನಮ್ಮನ್ನು ಕಾಡುವುದು  ಸಹಜ. ತತ್ವಶಾಸ್ತ್ರಕ್ಕೆ ಸಂಬಂಧಿಸಿದ ಈ ವಿಷಯಗಳ ಬಗ್ಗೆ ಬಹಳಷ್ಟು ಪುಸ್ತಕಗಳು ಕೂಡ ಪ್ರಕಟವಾಗಿವೆ. ಸ್ವಸಹಾಯ ಹಾಗೂ ಸ್ವಾವಲಂಬನೆಯನ್ನು ಪ್ರೇರೇಪಿಸುವ ಪುಸ್ತಕಗಳನ್ನು ಓದಿ ಜ್ಞಾನ ವೃದ್ಧಿಗೊಳಿಸಿಕೊಳ್ಳುವುದು ಸಮಂಜಸವೆ. ಇತ್ತೀಚೆಗೆ ನಾನು ಓದಿದ ಪುಸ್ತಕ ಇಕಿಗಾಯ್ ಈ ಗುಂಪಿಗೆ ಸೇರಿದೆ.

ಇಕಿಗಾಯ್‌ ಪುಸ್ತಕವನ್ನು ಬರೆದವರು ಹೆಕ್ಟರ್ ಗಾರ್ಸಿಯಾ ಮತ್ತು ಫ್ರಾಂಚೆಸ್ಕ್ ಮಿರಾಯೆ. ಇವರು ಜಪಾನ್ ದೇಶದ “ಒಕಿನಾವ” ಎನ್ನುವ ಪ್ರದೇಶಕ್ಕೆ ಭೇಟಿಕೊಟ್ಟು ಅಲ್ಲಿನ ಜನರ ನಡೆ-ನುಡಿ ದಿನನಿತ್ಯದ ಅಭ್ಯಾಸಗಳನ್ನು ಪರಿಶೀಲಿಸಿ ಇವುಗಳ ಬಗ್ಗೆ ಈ ಕೃತಿಯಲ್ಲಿ ಮಾತನಾಡುತ್ತಾರೆ. ಒಕಿನಾವ ಪ್ರದೇಶದ ವಿಶಿಷ್ಟತೆ ಏನೆಂದರೆ, ಅದು ಜಗತ್ತಿನಲ್ಲಿ ಅತಿ ಹೆಚ್ಚು ದೀರ್ಘಾಯುಷಿಗಳಿರುವಂತಹ ಜಾಗ. ಬಹಳ ಜನ ಅಲ್ಲಿ ಶತಾಯುಷಿಗಳಾಗಿದ್ದಾರೆ. ಇವರುಗಳ ದೀರ್ಘಾಯುಷ್ಯದ ಗುಟ್ಟೇನು ಎನ್ನುವುದೇ ಈ ಪುಸ್ತಕದ ಸಾರಾಂಶ.

ಜನರು ಆರೋಗ್ಯವಂತರಾಗಿ, ಸಂತಸದಿಂದ ದೀರ್ಘಕಾಲ ಬದುಕಿರಬೇಕಾದರೆ ಏನು ಮಾಡಬೇಕು ಎಂಬುದನ್ನು ಲೇಖಕರು ಈ ಪುಸ್ತಕದಲ್ಲಿ ವಿಸ್ತಾರವಾಗಿ ಪ್ರಸ್ತುತಪಡಿಸಿದ್ದಾರೆ. ನಮಗೆಲ್ಲ ಇದರ ಬಗ್ಗೆ ಆಗಲೇ ಅಲ್ಪ ಸ್ವಲ್ಪ ಗೊತ್ತಿರಬಹುದು. ಆದರೆ, ಇವುಗಳ ಬಗ್ಗೆ, ಉದಾಹರಣೆಗಳ ಮೂಲಕ ಅರ್ಥಗರ್ಭಿತವಾಗಿ ಹೇಳುವುದು ಒಂದು ರೀತಿಯ ಕಲೆ ಅಂತಾನೆ ಹೇಳಬಹುದು. ಲೇಖಕರು ಆಹಾರ ಪದ್ಧತಿ, ವ್ಯಾಯಾಮ, ಪ್ರಕೃತಿ, ಸಾಮಾಜಿಕ ಬೆಂಬಲ, ಶಾಂತಿಯುತ ಜೀವನದ ಮೌಲ್ಯಗಳು - ಹೀಗೆ ಹಲವಾರು ವಿಷಯಗಳ ಬಗ್ಗೆ ಬಹಳ ಚೆನ್ನಾಗಿ ವಾದಿಸಿದ್ದಾರೆ. ಉದಾಹರಣೆಗೆ, ನಾವು ವ್ಯಾಯಾಮ ಮಾಡಬೇಕು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ನಾವೇನು ಮ್ಯಾರಥಾನ್ ಓಡಬೇಕಿಲ್ಲ ಅಥವಾ ಪ್ರತಿದಿನ ಜಿಮ್ ಗೆ ಹೋಗಿ ಬೆವರು ಸುರಿಸಬೇಕಾಗಿಲ್ಲ. ನಾವು ಆದಷ್ಟು ಸಕ್ರಿಯರಾಗಿರಬೇಕು. ಕಾಲ್ನಡಿಗೆ, ತೋಟಗಾರಿಕೆ, ನೃತ್ಯ, ಯೋಗ ಹಾಗೂ ತಾಯ್‌ಚಿ, ತರಹದ ಸರಳ ಅಭ್ಯಾಸಗಳನ್ನು ಮಾಡಿದರೆ ಸಾಕು, ಎಷ್ಟೊ ಅನುಕೂಲವಾಗುತ್ತದೆ. ಊಟದಲ್ಲಿ ಕೂಡ ವಿಧವಿಧವಾದ ಆಹಾರಗಳನ್ನು ಸೇವಿಸಬೇಕು. ಹೊಟ್ಟೆ ೮೦ ಪ್ರತಿಶತ ತುಂಬಿದಾಗಲೇ ಊಟ ಮಾಡುವುದನ್ನು ನಿಲ್ಲಿಸಬೇಕು. ಈ ರೀತಿ ಹಲವಾರು ಉತ್ತಮ ಅಭ್ಯಾಸಗಳ ಬಗ್ಗೆ ಮಾತನಾಡುತ್ತಾ, ಲೇಖಕರು, ಜಪಾನ್ ದೇಶದ ಜನರ ಅಭಿಪ್ರಾಯಗಳನ್ನು ತಿಳಿಸುತ್ತಾರೆ.

ಇಕಿಗಾಯ್ ಅಂದರೇನು? “ಬದುಕು” ಹಾಗೂ “ಸಾರ್ಥಕ ಪಡಿಸುವುದು” ಎನ್ನುವ ಎರಡು ಪದಗಳ ಜೋಡಣೆಯಿಂದ ಮೂಡಿರುವ ಪದವೇ ಇಕಿಗಾಯ್‌. ಜೀವನದಲ್ಲಿ ನಾವು ಆರೋಗ್ಯವಾಗಿ, ಸಂತೋಷದಿಂದ, ಶಾಂತಿಯುತ ಬಾಳ್ವೆ ನಡೆಸಬೇಕಾದರೆ ನಾವು ನಮ್ಮ ಜೀವನದ ಉದ್ದೇಶವನ್ನು ಹಾಗು ಧ್ಯೇಯವನ್ನು ಕಂಡುಕೊಳ್ಳಬೇಕು. ಇದೇ ನಮ್ಮ ಇಕಿಗಾಯ್‌. ಹಾಗಾದರೆ ನಾವು ಇಕಿಗಾಯನ್ನು ಹೇಗೆ ಹುಡುಕುವುದು? ಇದನ್ನು ಲೇಖಕರು ಪುಸ್ತಕದಲ್ಲಿ ಒಂದು ಚಿತ್ರದ ಮೂಲಕ ವ್ಯಕ್ತಪಡಿಸುತ್ತಾರೆ. ಈ ಕೆಳಕಂಡ ೪ ಪ್ರಶ್ನೆಗಳಿಗೆ ನಾವು ಉತ್ತರ ಕಂಡುಹಿಡಿಯಬೇಕಾಗಿದೆ:
೧) ನೀವು ಏನನ್ನು ಪ್ರೀತಿಸುತ್ತೀರಿ? (ಧ್ಯೇಯ)
೨) ನೀವು ಯಾವುದರಲ್ಲಿ ಪರಿಣಿತರಿದ್ದೀರಿ? (ಗೀಳು)
೩) ನಿಮಗೆ ಏತಕ್ಕಾಗಿ ಸಂಭಾವನೆ ನೀಡಬಲ್ಲರು? (ಉದ್ಯೋಗ)
೪) ಲೋಕದ ಅಗತ್ಯವೇನು? (ವೃತ್ತಿ)

ಧ್ಯೇಯ, ಗೀಳು, ಉದ್ಯೋಗ ಹಾಗೂ ವೃತ್ತಿ, ಇವುಗಳಿಗೆ ನಮ್ಮಲ್ಲಿ ಒಂದೇ ಉತ್ತರವಿದ್ದರೆ, ಅದು ನಮ್ಮ ಇಕಿಗಾಯ್ ಆಗುತ್ತದೆ. ಪ್ರತಿಯೊಬ್ಬರ ಇಕಿಗಾಯ್‌ ಬೇರೆಯಾದರೂ ಜೀವನದ ಅರ್ಥದ ಹುಡುಕಾಟದಲ್ಲಿ ನಾವೆಲ್ಲರೂ ಒಂದೇ. ನಿಮ್ಮಲ್ಲಿ ಕೆಲವರಿಗೆ ಆಗಲೇ ಇಕಿಗಾಯ್‌ ದೊರಕಿರಬಹುದು, ಇನ್ನು ಕೆಲವರು ಹುಡುಕಾಡುತ್ತಿರಬಹುದು, ಕೆಲವರಿಗೆ ಇದರ ಬಗ್ಗೆ ಅರಿವಿರದಿರಬಹುದು. ಈ ಪಯಣದಲ್ಲಿ ನಾವು ಎಲ್ಲೇ ಇದ್ದರೂ ಈ ಪುಸ್ತಕ ನಿಮಗೆ ಸ್ಪೂರ್ತಿಯಾಗುವುದರಲ್ಲಿ ಸಂದೇಹವೇ ಇಲ್ಲ. ನಿಮಗೆ ಸಾಧ್ಯವಾದಲ್ಲಿ ಈ ಪುಸ್ತಕವನ್ನು ಓದಿ ನಿಮ್ಮ ಅಭಿಪ್ರಾಯ ತಿಳಿಸಲು ಮರೆಯಬೇಡಿ.

ಇಂತಿ ನಿಮ್ಮ, 
ಶ್ವೇತ

**************************************************************************