ಬದಲಾಗುತ್ತಿರುವ ಸಂಯುಕ್ತ ಅರಬ್ ಸಂಸ್ಥಾನಗಳು (UAE)

ಡಾ. ಜಿ. ಎಸ್. ಶಿವಪ್ರಸಾದ್  

ಕಳೆದ ಕೆಲವು ವಾರಗಳ ಹಿಂದೆ ನಾನು ಸಂಯುಕ್ತ ಅರಬ್ ಸಂಸ್ಥಾನಗಳ ರಾಷ್ಟ್ರದಲ್ಲಿ (UAE) ಪ್ರವಾಸ ಕೈಗೊಂಡಿದ್ದು ಅದರ ಬಗ್ಗೆ ಬರೆದಿರುವ ಈ ಲೇಖನವನ್ನು ನಿಮ್ಮ ಮುಂದಿಡುತ್ತಿದ್ದೇನೆ. ಇದು ಪ್ರವಾಸ ಕಥನ ಅನ್ನುವುದಕ್ಕಿಂದಂತ ಒಂದು ವೈಚಾರಿಕ ಲೇಖನವೆಂದು ನಾನು ಭಾವಿಸುತ್ತೇನೆ. ನಾವು ವೀಕ್ಷಸಿದ ಜನಪ್ರೀಯ ಪ್ರೇಕ್ಷಣೀಯ ತಾಣಗಳನ್ನು, ಅಲ್ಲಿಯ ನಿಸರ್ಗ ಸೌಂದರ್ಯವನ್ನು ಮತ್ತು ಅಲ್ಲಿ ನಮಗಾದ ಅನುಭವಗಳನ್ನು ಚಿತ್ರಗಳ ಜೊತೆ ಓದುಗರೊಂದಿಗೆ ಬರಹದಲ್ಲಿ ಹಂಚಿಕೊಂಡಾಗ ಅದು ಪ್ರವಾಸ ಕಥನವಾಗುತ್ತದೆ.  ಆದರೆ ಈ ನನ್ನ ಬರಹದಲ್ಲಿ ಹೆಚ್ಚಾಗಿ ನಾನು ಪ್ರವಾಸ ಮಾಡಿದ ದೇಶದ ಇತಿಹಾಸ, ಜನ ಜೀವನ ಮತ್ತು ಸಂಸ್ಕೃತಿಗಳ ಬಗ್ಗೆ ಪರಿಚಯಮಾಡಿಕೊಟ್ಟು ಅದರೊಡನೆ ನನ್ನ ಸ್ವಂತ ಅನಿಸಿಕೆಗಳನ್ನು ಬೆರೆಸಿ ಆದಷ್ಟು ವಿಮರ್ಶಾತ್ಮಕವಾದ ಲೇಖನವಾಗಿ ಪ್ರಸ್ತುತಿ ಪಡಿಸುವುದು ನನ್ನ ಉದ್ದೇಶವಾಗಿದೆ. ಇಲ್ಲಿ ಸ್ವಲ್ಪಮಟ್ಟಿಗೆ ಪ್ರವಾಸ ಕಥನ ಸೇರಿಕೊಂಡಿರುವುದು ಅನಿವಾರ್ಯವಾಗಿದೆ. ಈ ಬರಹವು ಹಲವಾರು ವಿಚಾರವನ್ನು ಒಳಗೊಂಡು ದೀರ್ಘ ಬರಹವಾದದ್ದರಿಂದ ಇದನ್ನು ಎರಡು ಕಂತುಗಳಲ್ಲಿ ಪ್ರಕಟಪಡಿಸಲಾಗಿದೆ. 
'ಬದಲಾಗುತ್ತಿರುವ ಸಂಯುಕ್ತ ಅರಬ್ ಸಂಸ್ಥಾನಗಳು ಭಾಗ ೧' ಎಂಬ ಈ ಬರಹವನ್ನು ಓದಿ ಮತ್ತು ನಿಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಿ.

- ಸಂ
ಮೂರು  ದಶಕಗಳ ಹಿಂದೆ ಅರಬ್ ಸಂಸ್ಥಾನಗಳೆಂದರೆ ಅಲ್ಲೇನಿದೆ ? ಬರೇ ಮರುಭೂಮಿ, ಒಂಟೆಗಳು ಮತ್ತು ನೆಲೆಯಿಲ್ಲದ ಅಲೆಮಾರಿ ಬೆಡೊವಿನ್ ಅರಬ್ಬರು ಎಂಬ ಕಲ್ಪನೆಗಳಿತ್ತು. ಅಲ್ಲಿಯ ಜನ ಜೀವನದ ಬಗ್ಗೆ, ಕಟುವಾದ ಕೈಕಾಲು ತುಂಡುಮಾಡುವ, ಚಾಟಿ ಏಟು ನೀಡುವ, ಕಲ್ಲಿನಲ್ಲಿ ಹೊಡೆದು ಸಾಯಿಸುವ ಟ್ರೈಬಲ್ ಶಿಕ್ಷೆಗಳ ಬಗ್ಗೆ ಅಂಜಿಕೆಗಳಿತ್ತು. ಪಾಶ್ಚಿಮಾತ್ಯರ ದೃಷ್ಟಿಯಲ್ಲಿ ಇಂಡಿಯಾ ಎಂದರೆ ಭಿಕ್ಷುಕರು, ಬೀದಿಯಲ್ಲಿ ದನಗಳು, ಹಾವಾಡಿಗರು, ಧೂಳು, ಕೊಳಕು ಎಂಬ ಕಲ್ಪನೆಗಳು ಇದ್ದಂತೆ! ಹಿಂದೆ ಅರಬ್ ರಾಷ್ಟ್ರಗಳೆಂದರೆ ಯಾವಾಗಲು ಜಗಳವಾಡಿಕೊಂಡಿದ್ದ ಇರಾನ್, ಇರಾಕ್ ಅಥವಾ ಶ್ರೀಮಂತ ದೇಶವಾದ ಸೌದಿ ಅಷ್ಟೇ ನಮಗೆ ತಿಳಿದಿತ್ತು.  ದುಬೈ ಅಬುದಾಬಿ ಎಂಬ ನಗರಗಳನ್ನು ಕೇಳಿರಲಿಲ್ಲ. ನನ್ನ ಈ ಬರಹದಲ್ಲಿ ಮುಖ್ಯ ವಿಷಯ ವಸ್ತುವಾದ ಸಂಯುಕ್ತ ಅರಬ್ ಸಂಸ್ಥಾನಗಳ 
ಈ ರಾಷ್ಟ್ರದ (United Arab Emirates: UAE) ಬಗ್ಗೆ ಹೆಚ್ಚಿನ ಅರಿವು ಇರಲಿಲ್ಲ. ಏಕೆಂದರೆ ಈ ದೇಶವು ಅಸ್ತಿತ್ವಕ್ಕೆ ಬಂದದ್ದು ೧೯೭೧ ರಲ್ಲಿ. ಪ್ರಪಂಚದ ಇತರ ದೇಶಗಳಿಗೆ ಹೋಲಿಸಿದಾಗ ಇದು ಇನ್ನು ಕಣ್ತೆರೆಯುತ್ತಿರುವ ರಾಷ್ಟ್ರ. ಹಿಂದೆ ಈ ಪ್ರದೇಶವು ಸ್ಥಳೀಯ ಸಣ್ಣ-ಪುಟ್ಟ ರಾಜಮನತನದ ಸ್ವಾಧೀನದಲ್ಲಿದ್ದು ಕಿಂಗ್ಡಮ್ ಅಥವಾ ಶೇಕ್ ಡಾಮ್ ಆಗಿತ್ತು. ಸುಮಾರು ೫೦೦ ವರ್ಷಗಳ ಹಿಂದೆ ಈ ಪ್ರದೇಶವು ಪೋರ್ಚುಗೀಸರ ಆಡಳಿತಕ್ಕೆ ಒಳಪಟ್ಟಿತ್ತು. ಹಿಂದೆ ಸಾಗರದಡಿಯ ಪರ್ಲ್(ಮುತ್ತು) ಟ್ರೇಡಿಂಗ್ ಇಲ್ಲಿಯ ಮುಖ್ಯ ವಾಣಿಜ್ಯ ವ್ಯಾಪಾರವಾಗಿ ಆದಾಯವನ್ನು ತರುತ್ತಿತ್ತು. ಪರ್ಷಿಯನ್ ಗಲ್ಫ್ ಅಂಚಿನ ಇಲ್ಲಿಯ ಜನರು, ವ್ಯಾಪಾರಿಗಳು, ಕಡಲ್ಗಳ್ಳರು ಆಗಾಗ್ಗೆ ಸಂಘರ್ಷಣೆಯಲ್ಲಿ ತೊಡಗಿದ್ದು ಅಶಾಂತಿ ನೆಲೆಸಿತ್ತು. ಪೋರ್ಚುಗೀಸರು ಇಲ್ಲಿಯ ಲಾಭದಾಯಕ ಅವಕಾಶವನ್ನು ಗ್ರಹಿಸಿ, ಆಕ್ರಮಿಸಿ ಕೋಟೆಗಳನ್ನು ಕಟ್ಟಿದರು, ದಬ್ಬಾಳಿಕೆಯಲ್ಲಿ ತೆರೆಗೆ ವಿಧಿಸಲು ಶುರುಮಾಡಿದರು. ನಂತರದ ಕೆಲವು ವರುಷಗಳಲ್ಲಿ ಅರಬ್ಬರ ಒಳಜಗಳವನ್ನು ಬಗೆಹರಿಸಲು ಮತ್ತು ಆಶ್ರಯ ನೀಡಲು ಬ್ರಿಟಿಷರು ಮುಂದಾದರು, ಕಾದಾಡುತ್ತಿರುವ ಅರಬ್ಬರಲ್ಲಿ ಶಾಂತಿಯ ಒಪ್ಪಂದಗಳನ್ನು ತಂದು ಈ ಪ್ರದೇಶಗಳಲ್ಲಿ ಸ್ಥಿರತೆಯನ್ನು ತಂದುಕೊಟ್ಟರು.

೧೯೩೦ರಲ್ಲಿ ಈ ನಾಡಿನಲ್ಲಿ ಅನಿಲ ಮತ್ತು ತೈಲ ಸಂಪನ್ಮೂಲಗಳಿವೆಯೆಂದೇ ತಿಳಿದುಬಂತು. ಇದು ಅರಬ್ಬರ ಬದುಕಿನ ದಿಕ್ಕನ್ನೇ ಬದಲಾಯಿಸಿತು. ಅಂದಹಾಗೆ ಈ ಪ್ರದೇಶವು ಅನಾದಿಕಾಲದಿಂದಲೂ ಪೂರ್ವ ಮತ್ತು ಪಶ್ಚಿಮ ವಾಣಿಜ್ಯಗಳು ಸಂಧಿಸುವ ತಾಣವಾಗಿತ್ತು. ಭೌಗೋಳಿಕವಾಗಿ ವಾಣಿಜ್ಯ ದೃಷ್ಟಿಯಿಂದ ಅನುಕೂಲಕರವಾಗಿತ್ತು. ಬ್ರಿಟಿಷ್ ಸಂಸ್ಥೆಗಳಿಗೆ ಇಲ್ಲಿಯ ತೈಲ ಅನಿಲ ನಿರ್ವಾಹಣ ಪರ್ಮಿಟ್ ಗಳನ್ನು ಕೊಟ್ಟಿದ್ದು ೬೦ರ ದಶಕದಲ್ಲಿ ಅಮೇರಿಕ ಕಂಪನಿಗಳು ನಿಧಾನಕ್ಕೆ ಆ ಕಂಟ್ರಾಕ್ಟುಗಳನ್ನು ಪಡೆದವು. ೧೯೬೮ರ ಸಮಯದಲ್ಲಿ ಬ್ರಿಟಿಷ್ ಸರ್ಕಾರಕ್ಕೆ ಈ ಶೇಕ್ ರಾಜ್ಯಗಳಿಗೆ ರಕ್ಷಣೆ ಮತ್ತು ಆಶ್ರಯ ಒದಗಿಸುವುದು ಕಷ್ಟವಾಗತೊಡಗಿತು. ತಾವು ನೀಡುತ್ತಿದ್ದ ಆಶ್ರಯವನ್ನು ರದ್ದುಪಡಿಸಿ, ಅಲ್ಲಿಯ ರಕ್ಷಣಾ ವ್ಯವಸ್ಥೆಯನ್ನು, ಒಪ್ಪಂದವನ್ನು ಕೊನೆಗಾಣಿಸುವ ನಿರ್ಧಾರವನ್ನು ಅಂದಿನ ಪ್ರಧಾನಿ ಹೆರಾಲ್ಡ್ ವಿಲ್ಸನ್ ಬಹಿರಂಗಪಡಿಸಿದರು. ಅನಿಲ ತೈಲ ಸಂಪನ್ಮೂಲಗಳನ್ನು ಹೊಂದಿರುವ ಈ ರಾಷ್ಟ್ರಗಳ ನಾಯಕರು ತಮ್ಮ ಮುಂದಿರುವ ಉಜ್ವಲ ಭವಿಷ್ಯವನ್ನು ಮತ್ತು ಸಾಧ್ಯತೆಗಳನ್ನು ಕಂಡುಕೊಂಡು ೧ನೇ ಡಿಸೆಂಬರ್ ೧೯೭೧ ರಲ್ಲಿ ಸಂಯುಕ್ತ ಅರಬ್ ಸಂಸ್ಥಾನಗಳಾದ ಈ ರಾಷ್ಟ್ರವನ್ನು (UAE) ಹುಟ್ಟುಹಾಕಿದರು. ಹಿಂದೆ ಈ ಒಕ್ಕೂಟವನ್ನು ಸೇರಬೇಕಾಗಿದ್ದ ಕತಾರ್ ಮತ್ತು ಬಹರೈನ್ ದೇಶಗಳು ತಮ್ಮದೇ ಆದ ಸ್ವಾತಂತ್ರ್ಯವನ್ನು ಪಡೆದುಕೊಂಡವು. ಈ ಸಂಯುಕ್ತ ಅರಬ್ ಸಂಸ್ಥಾನಗಳ ಈ ರಾಷ್ಟ್ರದಲ್ಲಿ ಅಬುದಾಬಿ, ದುಬೈ, ಶಾರ್ಜಾ, ಅಜ್ಮಾನ್, ಫುಜೈರ, ಉಮ್ ಅಲ ಕ್ಯೋವೆನ್, ಮತ್ತು ರಾಸ್ ಎಲ್ ಕೈಮ ಎಂಬ ಏಳು ರಾಜಮನೆತನಗಳು ಸೇರಿಕೊಂಡವು. ಅಬುದಾಬಿಯ ರಾಜರಾಗಿದ್ದ ಶೇಕ್ ಜಾಯೀದ್ ಬಿನ್ ಸುಲ್ತಾನ್ ಅಲ ನಹ್ಯಾನ್ ಅವರು ಈ ಸಂಯುಕ್ತ ಅರಬ್ ರಾಷ್ಟ್ರವನ್ನು ಹುಟ್ಟುಹಾಕುವಲ್ಲಿ ನೇತಾರರಾಗಿದ್ದು ಈ ರಾಷ್ಟ್ರದ ಮೊದಲ ಅಧ್ಯಕ್ಷರಾಗಿದ್ದರು. ದುಬೈ ಮತ್ತಿತರ ನಗರಗಳ ಮುಖ್ಯ ರಸ್ತೆಗಳಿಗೆ ಮತ್ತು ಅಬುದಾಬಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅವರ ಹೆಸರಿಟ್ಟು ಗೌರವಿಸಲಾಗಿದೆ. ಹಿಂದೆ ಒಂದು ನೆಲೆಯಲ್ಲಿ ನಿಲ್ಲದೆ, ಅಲೆಮಾರಿ ಬುಡಕಟ್ಟಿನ ಜನಾಂಗದವರಾಗಿ, ಜಂಗಮರಾಗಿದ್ದ ಈ ಜನ ತಮ್ಮ ತೈಲ ಅನಿಲ ಸಂಪನ್ಮೂಲಗಳಿಂದ ಶ್ರೀಮಂತರಾಗಿ ಒಂದು ಮರುಭೂಮಿ ಪ್ರದೇಶವನ್ನು ಕಂಗೊಳಿಸುವ ನೂತನ ನಗರಗಳಾಗಿ, ಸಮುದ್ರದನೀರನ್ನು ಸಿಹಿನೀರಾಗಿ ಪರಿವರ್ತಿಸಿ ಹಸಿರುಮೂಡಿಸಿದ್ದಾರೆ. ಸಂಪನ್ಮೂಲಗಳಿಂದ ಬಂದ ಹಣದಲ್ಲಿ ರಸ್ತೆ, ಆಸ್ಪತ್ರೆ, ಶಾಲಾ ಕಾಲೇಜು ಮತ್ತು ಇತರ ಸಾರ್ವಜನಿಕ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ದೇಶವನ್ನು ಕಟ್ಟಿದ್ದಾರೆ. ತೈಲದಿಂದ ಬರುವ ಆದಾಯವನ್ನು ಹೊರತಾಗಿ ಮಲ್ಟಿ ನ್ಯಾಷನಲ್ ವಾಣಿಜ್ಯ ಸಂಸ್ಥೆಗಳಿಗೆ, ಖಾಸಗಿ ಉದ್ದಿಮೆದಾರರಿಗೆ ಕಂಪನಿಗಳನ್ನು ಹೂಡಲು ಅವಕಾಶವನ್ನು ಕಲ್ಪಿಸಿ ವಾಣಿಜ್ಯ ವ್ಯವಹಾರಗಳು ಸುಗಮವಾಗಿ ಸಾಗಿವೆ. ಇತ್ತೀಚಿನ ವರುಷಗಳಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಿ ಅದರಿಂದ ಈ ದೇಶಕಕ್ಕೆ ಸಾಕಷ್ಟು ಆದಾಯ ಬರುತ್ತಿದೆ. ಇಲ್ಲಿ ಹಣಹೂಡಿದವರಿಗೆ ತೆರಿಗೆಯಿಂದ ಸ್ವಲ್ಪಮಟ್ಟಿಗೆ ಮುಕ್ತಿಯಿದೆ. ಹಣ, ಉದ್ಯೋಗ ಅವಕಾಶ, ರಾಜಕೀಯ ಸ್ಥಿರತೆ, ದೂರದೃಷ್ಟಿ, ಇಲ್ಲಿಯ ಸರ್ವತೋಮುಖ ಬೆಳವಣಿಗೆಗೆ, ಅಭಿವೃದ್ಧಿಗೆ ಕಾರಣವಾಗಿದೆ.

ನನಗೆ ಈ ಸಂಯುಕ್ತ ಅರಬ್ ರಾಷ್ಟ್ರದ ಪರಿಚಯವಾದದ್ದು ನಾನು ಇಂಗ್ಲೆಂಡಿನಿಂದ ಇಂಡಿಯಾಗೆ ಹೋಗಿ ಬರಲು ಬಳಸುತ್ತಿದ್ದ ಎಮಿರೇಟ್ಸ್, ಎತಿಹಾಡ್ ವಿಮಾನ ಕಂಪನಿಗಳಿಂದ. ಬೆಂಗಳೂರಿಗೆ ಹೋಗುವ ಮಾರ್ಗದಲ್ಲೇ ಅನಾಯಾಸವಾಗಿ ಮೂರು ದಿವಸಗಳ ಮಟ್ಟಿಗೆ ಪ್ರಯಾಣದಲ್ಲಿ ಬ್ರೇಕ್ ಪಡೆದು ಎರಡು ಬಾರಿ ದುಬೈ ನಗರವನ್ನು ವೀಕ್ಷಿಸಿ ಬೆರಗಾಗಿದ್ದೆ. ಅಷ್ಟೇ ಅಲ್ಲದೆ ಇಲ್ಲಿಯ ಅದ್ವಿತೀಯ ಮನುಷ್ಯ ಪ್ರಯತ್ನಗಳನ್ನು ಮೆಚ್ಚಿಕೊಂಡು ಮುಂದೊಮ್ಮೆ ಧೀರ್ಘ ಪ್ರವಾಸದಲ್ಲಿ ಇಲ್ಲಿಯ ಇತರ ನಗರಗಳನ್ನು ಒಳನಾಡ ಪ್ರದೇಶಗಳನ್ನು ವೀಕ್ಷಸಬೇಕೆಂಬ ಹಂಬಲ ಮೂಡಿಬಂತು. ಇದಕ್ಕೆ ಪೂರಕವಾಗಿ ಹಿಂದೆ ನಾವಿದ್ದ ಇಂಗ್ಲೆಂಡಿನ ವುಲ್ವರ್ಹ್ಯಾಂಪ್ಟಾನ್ ಎಂಬ ನಗರದಲ್ಲಿ ನಿವಾಸಿಗಳಾಗಿದ್ದು, ನಮ್ಮ ಮಿತ್ರರಾದ ಡಾ.ರಮೇಶ್ ಮತ್ತು ಅವರ ಪತ್ನಿ ಅನ್ನಪೂರ್ಣ ಅವರು ಈಗ ಅಬುದಾಬಿ ಪಕ್ಕದ ಅಲೈನ್ ನಗರದಲ್ಲಿ ವೃತ್ತಿಯಿಂದಾಗಿ ನೆಲೆಸಿದ್ದು ನಮಗೆ ಬರಲು ಆಹ್ವಾನವನ್ನು ನೀಡಿದರು. ೨೦೨೪ರ ಫೆಬ್ರುವರಿ ತಿಂಗಳ ಮೊದಲವಾರದಲ್ಲಿ ನಾನು ಮತ್ತು ನನ್ನ ಶ್ರೀಮತಿ ಡಾ. ಪೂರ್ಣಿಮಾ ಈ ದೇಶದಲ್ಲಿ ಹತ್ತು ದಿವಸಗಳ ಪ್ರವಾಸವನ್ನು ಕೈಗೊಂಡೆವು. ಪ್ರೇಕ್ಷಣೀಯ ತಾಣಗಳನ್ನು ನೋಡುವುದರ ಜೊತೆಗೆ ಇಲ್ಲಿಯ ದಿನ ನಿತ್ಯ ಬದುಕಿನ ಅನುಭವವನ್ನು ಸಾಧ್ಯವಾದಷ್ಟು ಹತ್ತಿರದಿಂದ ಕಾಣುವ ಕುತೂಹಲ ಮತ್ತು ಹಂಬಲ ನಮ್ಮದಾಗಿತ್ತು.

ಅಬುದಾಬಿ ವಿಮಾನನಿಲ್ದಾಣದಲ್ಲಿ ಡಾ. ರಮೇಶ್ ಅವರು ಕಳುಹಿಸಿಕೊಟ್ಟ ಶಿಜೊ ಎಂಬ ಮಲೆಯಾಳಿ, ಸುಶೀಕ್ಷಿತ, ಸಜ್ಜನ್ ಡ್ರೈವರ್ ಬಂದು ವಿನಮ್ರವಾಗಿ ಸ್ವಾಗತಿಸಿ, ನಮ್ಮ ಲಗೇಜುಗಳನ್ನು ಕಾರಿಗೆ ವರ್ಗಾಯಿಸಲು ನೆರವು ನೀಡಿ, ತನ್ನ ಏಳು ಸೀಟಿನ ಭವ್ಯವಾದ ಟೊಯೋಟಾ ಕಾರಿನಲ್ಲಿ ನಮ್ಮನ್ನು ಕುಳ್ಳಿರಿಸಿಕೊಂಡು ಅಲೈನ್ ಹೆದ್ದಾರಿಯನ್ನು ಹಿಡಿದ. ಇಂಗ್ಲೆಂಡಿನಂತಹ ಪುಟ್ಟ ದೇಶದಲ್ಲಿನ ಪುಟ್ಟ ಪುಟ್ಟ ಕಾರುಗಳನ್ನು ಕಂಡಿರುವ ನಮಗೆ, ಪೆಟ್ರೋಲನ್ನು ಇನ್ನಿಲ್ಲದಂತೆ ಕುಡಿದು ಬಿಡುವ ಇಲ್ಲಿಯ ದೈತ್ಯಾಕಾರದ ಕಾರುಗಳು, ಆರು ಎಂಟು ಲೇನ್ ರಸ್ತೆಗಳು, ೧೬೦ ಕಿಮಿ ವೇಗದಲ್ಲಿ ಸಾಗುವ ವಾಹನಗಳು ಅಚ್ಚರಿಯೊಡನೆ ಸ್ವಲ್ಪ ಭಯವನ್ನೂ ಮೂಡಿಸಿತು. ಪೆಟ್ರೋಲ್ ಬೆಲೆ ಎಲ್ಲ ದೇಶಗಳಲ್ಲಿ ಹೆಚ್ಚಾಗಿರುವಾಗ ಇಲ್ಲಿ ಅದರ ಬೆಲೆ ಅಗ್ಗವಾಗಿದೆ. ಹೀಗಾಗಿ ಈ ದೇಶದಲ್ಲಿ ನೆಲೆಸಿರುವ ಜನಕ್ಕೆ ಅದರ ಬಗ್ಗೆ ಚಿಂತೆಯೇ ಇಲ್ಲ. 'ಘೋಡಾ ಹೈ ಮೈದಾನ್ ಹೈ' ಎಂಬ ಹಿಂದಿ ಉಕ್ತಿ ನೆನಪಿಗೆ ಬಂತು. ಜಾಗತಿಕ ತಾಪಮಾನದ ಹಿನ್ನೆಲೆಯಲ್ಲಿ ಯೂರೋಪಿನ ಹಲವಾರು ದೇಶಗಳು ಈಗ ಚಿಕ್ಕ ಎಲೆಕ್ಟ್ರಿಕ್ ವಾಹನಗಳನ್ನು ಬಳಸುತ್ತಿರುವಾಗ ಈ ಅರಬ್ಬರು ಮತ್ತು ಅಮೆರಿಕನ್ನರು ಭಾರೀಗಾತ್ರದ ಕಾರುಗಳಲ್ಲಿ ಓಡಾಡುತ್ತಿದ್ದಾರೆ. ನಗರ-ನಗರಗಳನ್ನು ಜೋಡಿಸಿರುವ ಹೆದ್ದಾರಿಗಳಲ್ಲಿ ನೂರಾರು ಮೈಲಿ ಉದ್ದದವರೆಗೆ ಸಾಲು ವಿದ್ಯುತ್ ದೀಪಗಳನ್ನು ಇಡೀ ರಾತ್ರಿ ಹಚ್ಚುತ್ತಾರೆ. ಪ್ರಪಂಚದ ಸಂಪನ್ಮೂಲದ ಬಳಕೆಯ ಬಗ್ಗೆ, ಪರಿಸರದ ಬಗ್ಗೆ ಕಾಳಜಿ ಇವರಿಗಿದೆಯೇ ಎಂಬ ಅನುಮಾನ ಉಂಟಾಗುವುದು ಸಹಜ. ಇತ್ತೀಚಿನ ಜಾಗತಿಕ ತಾಪಮಾನದ ಬಗ್ಗೆ ಚರ್ಚಿಸುವ ಕಾಪ್ ೨೮ ಎಂಬ ೨೦೨೩ ವರ್ಷದ ಸಮಾವೇಶವನ್ನು ದುಬೈನಲ್ಲಿ ನಡೆಸಿದ್ದು ಅದನ್ನು ಹಲವಾರು ದೇಶಗಳು ಪ್ರಶ್ನಿಸಿವೆ. ಈ ಅರಬ್ ರಾಷ್ತ್ರ ೨೦೫೦ರ ಹೊತ್ತಿಗೆ ತಮ್ಮ ಫಾಸಿಲ್ ಇಂಧನದ ಉಪಯೋಗ ಅರ್ಧದಷ್ಟು ಕಡಿಮೆಮಾಡಿ ಪರಿಸರಕ್ಕೆ ಪೂರಕವಾಗುವ ಮತ್ತು ಕಾರ್ಬನ್ ಹೆಜ್ಜೆ ಗುರುತನ್ನು ಕಡಿಮೆಮಾಡುವ ನಿರ್ಧಾರವನ್ನು ಕೈಗೆತ್ತಿಕೊಂಡಿರುವುದು ಸಮಾಧಾನಕರವಾದ ವಿಚಾರ. ಈ ಆಲೋಚನಗಳ ನಡುವೆ ಪ್ರಯಾಣಮಾಡಿ ಒಂದು ಗಂಟೆಯ ಸಮಯದನಂತರ ಒಂದು ಚಿಕ್ಕ ಊರನ್ನು ಹೊಕ್ಕು ಅಲ್ಲಿರುವ ಅಂಗಡಿಸಾಲಿನಲ್ಲಿದ್ದ ಚಿಕ್ಕ ರೆಸ್ಟೋರಾಂಟಿನಲ್ಲಿ ಶಿಜೊ ನೀಡಿದ ಆದೇಶದ ಮೇಲೆ ಒಬ್ಬ ಮಲೆಯಾಳಿ ಹುಡುಗ ಮೂರು ಕಪ್ ಖಡಕ್ ಚಾ ವನ್ನು ಕಾರಿಗೇ ತಂದುಕೊಟ್ಟ. ಒಂದೆರಡು ಗುಟುಕು ಹೀರಿದಾಗ ಚಾ ಒಳಗಿನ ಏಲಕ್ಕಿ ಘಮಲು, ಸಿಹಿ ರುಚಿ, ಗಟ್ಟಿಯಾದ ಹಾಲು ನನ್ನನ್ನು ಕೂಡಲೇ ಕೇರಳದ ವೈನಾಡಿಗೆ ಒಯ್ದಿತ್ತು. ಪಟ್ಟ-ಪಟ್ಟಿ ಪಂಚೆಯ ಮಲಯಾಳಿ ಕಾಕಾಗಳು, ಹಸಿರು ಬೆಟ್ಟಗಳು, ಹೆಮ್ಮರಗಳು ಅದರ ನೆರಳಲ್ಲಿ ಬೆಳೆಯುವ, ಏಲಕ್ಕಿಗಿಡಗಳು ಅದರ ಉದ್ದದ ಹಸುರಿನ ತೆನೆಗಳು ಎಲ್ಲಾ ನನ್ನ ಸ್ಮೃತಿಯಲ್ಲಿ ಹಾದುಹೋದವು. ವಾಸ್ತವದಲ್ಲಿ ನೋಡಿದಾಗ ನನ್ನ ಸುತ್ತ ಮರುಭೂಮಿಯ ರಾಶಿರಾಶಿ ಮರಳು, ಮಸೀದಿಗಳು, ಮಿನಾರೆಟ್ಟುಗಳು, ಅರಬ್ ಜನರು! ಎಲ್ಲಿಯ ಖಡಕ್-ಏಲಕ್ಕಿ ಚಾ ಎಲ್ಲಿಯ ಮರಳುಗಾಡು! ಎತ್ತಣಿಂದೆತ್ತ ಸಂಬಂಧವಯ್ಯ?

ದಾರಿಯುದ್ದಕ್ಕೂ ಬಂಜರು ಭೂಮಿ. ಅಲೆ ಅಲೆಯಾಗಿ ಹಬ್ಬಿರುವ ಮರಳಿನ ದಿಣ್ಣೆಗಳು. ಮರಳಲ್ಲಿ ಗಾಳಿ ಕೆತ್ತಿದ ಚಿತ್ತಾರಗಳು, ಮಕ್ಕಳು ಸ್ಲೇಟಿನ ಮೇಲೆ ಹಳೆ ಚಿತ್ರಗಳನ್ನು ಅಳಿಸಿ ಮತ್ತೆ ಹೊಸ ಚಿತ್ರಗಳನ್ನು ಮೂಡಿಸುವಂತೆ ಗಾಳಿ ಮತ್ತು ಮರಳು ಆಟವಾಡುತ್ತಿದ್ದವು. ನಡುವೆ ನಿರ್ಜನ ಪ್ರದೇಶಗಳು, ಹತ್ತಾರು ಮೈಲಿಗೊಂದು ನಾಗರೀಕತೆಯ ಹತ್ತಿರ ನಾವಿದ್ದೇವೆಂದು ಖಾತ್ರಿಪಡಿಸುವ ಪುಟ್ಟ ತಲೆ, ಎರಡು ಕಾಲು ಮತ್ತು ಎರಡು ಕೈಯನ್ನು ಕೆಳಗೆ ಬಿಟ್ಟಂತಹ ಎಲೆಕ್ಟ್ರಿಕ್ ಪೈಲಾನ್ ಗಳು, ಅದರಿಂದ ತೂಗಿರುವ ವಿದ್ಯುತ್ ತಂತಿಗಳು ಇವು ಇಲ್ಲಿಯ ನೋಟ. ಕೆಲವೊಮ್ಮೆ ಸಮತಟ್ಟಾದ ಪ್ರದೇಶದಲ್ಲಿ ರಸ್ತೆ ಬದಿಯ ಬೇಲಿಯ ಆಚೆಗೆ ತೀವ್ರ ಗತಿಯಲ್ಲಿ ಸಾಗುವ ವಾಹನಗಳನ್ನು ನಿರ್ಲಕ್ಷಿಸಿ ಕೆಲವು ಒಂಟೆಗಳು ತಮ್ಮದೇ ಸಾವಧಾನದಲ್ಲಿ ಒಣಗಿದ್ದ ಕುರುಚಲು ಹುಲ್ಲನ್ನು ಮೇಯುತ್ತಾ, ಹುಲ್ಲನ್ನು ಈ ದವಡೆಯಿಂದ ಆ ದವಡೆಗೆ ವರ್ಗಾಯಿಸಿ, ನಮ್ಮ ಹಳ್ಳಿಯ ವೃದ್ದರು ಹೊಗೆಸೊಪ್ಪನ್ನು ಮೇಯುವಂತೆ ಜಗಿಯುತ್ತಾ ದಿವ್ಯ ಧ್ಯಾನ ಸ್ಥಿತಿಯಲ್ಲಿ ಮಗ್ನರಾಗಿದ್ದವು. ಒಂಟೆಗಳಿಗೆ ಅವಸರ ಎಂಬ ಪದ ಅದರ ಡಿಕ್ಷನರಿಯಲ್ಲಿ ಇಲ್ಲ ಎಂಬುದು ನನ್ನ ಅನಿಸಿಕೆ. ಇಂತಹ ಮಂದಗತಿಯ ಒಂಟೆಗಳನ್ನು ಹಿಡಿದು ಅರಬ್ಬರು ಹೇಗೆ ಕ್ಯಾಮಲ್ ರೇಸ್ ನಡೆಸುತ್ತಾರೋ ನಾ ತಿಳಿಯೆ. ಹಿಂದೆ ಶಿಶುಗಳನ್ನು ಒಂಟೆಯ ಹೊಟ್ಟೆಗೆ ಕಟ್ಟಿ ಕ್ಯಾಮಲ್ ರೇಸ್ ನಡೆಸುತ್ತಿದ್ದು ಈಗ ಆ ಪದ್ದತಿಯನ್ನು ಬಿಟ್ಟು ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳೆಸುತ್ತಿದ್ದಾರೆ ಎಂದು ಕೇಳಿದ್ದೇನೆ. ಮಕ್ಕಳು ಹೆದರಿಕೆಯಿಂದ ಚೀರುತ್ತಿದ್ದಾಗ ಗಾಬರಿಗೊಂಡ ಒಂಟೆಗಳು ಜೋರಾಗಿ ಓಡುತ್ತಿದ್ದವು. ಆ ಕ್ರೂರ ಪದ್ಧತಿಯನ್ನು ಈಗ ಕೈ ಬಿಟ್ಟಿರುವುದು ಒಳ್ಳೆಯ ನಿರ್ಧಾರ.

ನಾವು ಅಬುದಾಬಿಯಿಂದ ಅಲೈನ್ ವರಿಗೆ ಕ್ರಯಿಸಿದ ದಾರಿಯಲ್ಲಿ ನೂರಾರು ಕಿಲೋ ಮೀಟರ್ ರಸ್ತೆಯ ಎರಡು ಬದಿಯಲ್ಲಿ ಹಸಿರು ಮರಗಳ ಸಾಲು ಮತ್ತು ರಸ್ತೆ ಮಧ್ಯದ ಡಿವೈಡರ್ ಜಗದಲ್ಲಿ ಸಾಲಾಗಿ ನಿಂತ ಈಚಲು ಮರ ಜಾತಿಯ ಡೇಟ್ಸ್ ಮರಗಳನ್ನು ಕಂಡು ಸೋಜಿಗವಾಯಿತು. "ಬೆಟ್ಟದ ತುದಿಯಲ್ಲಿ ಹುಟ್ಟಿರುವ ವೃಕ್ಷಕ್ಕೆ ಕಟ್ಟೆಯನು ಕಟ್ಟಿ ನೀರೆರೆದವರು ಯಾರೋ?" ಎಂಬ ದಾಸರ ಪದ ನೆನೆಪಿಗೆ ಬರುತ್ತಿದಂತೆ, ಶಿಜೊ "ಸಾರ್ ರಸ್ತೆ ಪಕ್ಕದಲ್ಲಿರುವ ಮರದ ಬುಡಗಳನ್ನು ಗಮನಿಸಿ, ಅಲ್ಲಿ ಇರುವ ಪೈಪ್ ಗಳನ್ನೂ ನೋಡಿ, ಅರಬ್ಬರು ನೂರಾರು ಮೈಲಿ ಪೈಪ್ಗಳನ್ನು ಎಳೆದು ಈ ಗಿಡಗಳಿಗೆ ಮರುಭೂಮಿಯಲ್ಲಿ ನೀರುಣಿಸುತ್ತಿದ್ದಾರೆ” ಎಂದು ನನ್ನ ಗಮನವನ್ನು ಸೆಳೆದ. ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದಾಗ ದೈವವನ್ನಷ್ಟೇ ನೆನೆಯುವ ನಮ್ಮ ಆಧ್ಯಾತ್ಮಿಕ ಪ್ರಜ್ಞೆಯಿಂದ ಹೊರಬಂದು ವಾಸ್ತವಬದುಕಿನ ಮುಂದಿರುವ ಮನುಷ್ಯ ಪ್ರಯತ್ನವನ್ನು ಕಂಡು ಬೆರಗಾದೆ. ಮನದಲ್ಲೇ ಭೇಷ್ ಎಂದು ಪ್ರಶಂಸಿದೆ. ಇಲ್ಲಿ ಮಳೆ ಹೆಚ್ಚಾಗಿ ಬರುವುದಿಲ್ಲ, ಇದು ಮರುಭೂಮಿ ಹೀಗಿದ್ದರೂ ನೀರು ಎಲ್ಲಿಂದ ಬರುತ್ತದೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ದೇಶದಲ್ಲಿ ನದಿಗಳಲ್ಲಿಲ್ಲ. ಹಾಜರ್ ಬೆಟ್ಟ ಹಾದುಹೋಗುವ ದಕ್ಷಿಣ ಪ್ರದೇಶದಲ್ಲಿ ಕೆಲವು ಅಣೆಕಟ್ಟುಗಳನ್ನು ಕಟ್ಟಿ ನೀರನ್ನು ಶೇಖರಿಸಿದ್ದಾರೆ. ಬಹಳಷ್ಟು ವೇಸ್ಟ್ ನೀರನ್ನು ರಿಸೈಕಲ್ ಮಾಡಿ ಗಿಡ ಮರಗಳಿಗೆ ಬಳಸುತ್ತಾರೆ. ಉಳಿದಂತೆ ಇವರು ಸಮುದ್ರದ ನೀರನ್ನು ಆಧುನಿಕ ತಂತ್ರಜ್ಞಾನದಲ್ಲಿ ದೇಶದುದ್ದಕ್ಕೂ ಸುಮಾರು ೭೦ ಡೀಸಲಿನೇಷನ್ ಘಟಕಗಳನ್ನು ಸ್ಥಾಪಿಸಿ ಅದರಲ್ಲಿ ಸಿಹಿ ನೀರನ್ನು ಉತ್ಪತ್ತಿ ಮಾಡುತ್ತಾರೆ. ಪ್ರವಾಸಿತಾಣಗಳಲ್ಲಿ, ನಗರದ ಪ್ರಮುಖ ರಸ್ತೆಗಳಲ್ಲಿ ಹೂವಿನ ಗಿಡಗಳನ್ನು ನೆಟ್ಟು ಅಂದಗೊಳಿಸಿದ್ದಾರೆ. ದುಬೈನಲ್ಲಿರುವ ಮಿರಾಕಲ್ ಗಾರ್ಡನ್ ಎಂಬ ಅದ್ಭುತ ಹೂಗಳ ಉದ್ಯಾನ ಇವರ ನಿಸರ್ಗಪ್ರೀತಿಗೆ ಸಾಕ್ಷಿಯಾಗಿದೆ. ಇದು ದುಬೈಗೆ ಹೋಗುವ ಎಲ್ಲ ಪ್ರವಾಸಿಗಳು ನೋಡಲೇ ಬೇಕಾದ ಉದ್ಯಾನವನ.

ನಾವು ಅಲೈನ್ ನಗರವನ್ನು ಪ್ರವೇಶಿಸಿದಂತೆ ಅದು ಸಂಯುಕ್ತ ಅರಬ್ ರಾಷ್ಟ್ರದಲ್ಲಿನ ಅತ್ಯಂತ ಹಸಿರು ನಗರವೆಂದು ತಿಳಿಯುತ್ತದೆ. ನಮ್ಮ ಮಿತ್ರರಾದ ಡಾ.ರಮೇಶ್ ಅವರು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಹಿರಿಯ ತಜ್ಞ ವೈದ್ಯರಾಗಿದ್ದು ಅವರಿಗೆ ಅನುಕೂಲವಾದ ಮನೆಯನ್ನು ಸರ್ಕಾರ ಒದಗಿಸಿದೆ. ಇಲ್ಲಿ ಅನುಕೂಲವಾದ ಎಂಬ ಪದಕ್ಕೆ ವಿಶೇಷ ಅರ್ಥ ಇರಬಹುದು. ನಮ್ಮ ಈ ಅತಿಥಿಗಳ ಬಹು ಅಂತಸ್ತಿನ ಮನೆ ಸುಂದರವಾಗಿ, ಹಿರಿದಾಗಿ ಭವ್ಯವಾಗಿದೆ. ಅರಬ್ ಜನರು ತಮ್ಮ ವಾಸಕ್ಕೆಂದು ಕಟ್ಟಿಕೊಂಡಿದ್ದು ನಂತರದಲ್ಲಿ ಅದನ್ನು ಬಾಡಿಗೆ ಕೊಟ್ಟಂತೆ ಕಾಣುತ್ತದೆ. ಕುಟುಂಬವರ್ಗದವರಿಗೆ, ಹೆಂಗಸರಿಗೆ ಒಂದು ಪ್ರವೇಶ ದ್ವಾರ, ಕುಟುಂಬದ ಹೊರಗಿನ ಗಂಡಸರಿಗೆ ಇನ್ನೊಂದು ಪ್ರವೇಶದ್ವಾರ, ಕೆಲಸದವರು ಪ್ರವೇಶಿಸಲು ಬೇರೊಂದು ದ್ವಾರ! ಇನ್ನು ಮನೆಯೊಳಗೆ ಲೆಕ್ಕವಿಲ್ಲದಷ್ಟು ಕೋಣೆಗಳು ಎನ್ನಬಹುದು. ಇಲ್ಲಿ ಎಲ್ಲರ ಮನೆಯ ಕಾಂಪೌಂಡ್ ಗೋಡೆ ಎತ್ತರವನ್ನು ಗಮನಿಸಿದರೆ ಚಿತ್ರದುರ್ಗದ ಕೋಟೆ ಅಥವಾ ಬೆಂಗಳೂರಿನ ಸೆಂಟ್ರಲ್ ಜೈಲ್ ಜ್ಞಾಪಕಕ್ಕೆ ಬರುತ್ತದೆ. ಮನೆಯೊಳಗೇ ಯಾರಿದ್ದಾರೆ, ಮಕ್ಕಳಿದ್ದಾರೆಯೇ, ಗಿಡ ಮರಗಳು ಹೇಗಿವೆ ಇದರ ಸುಳಿವೇ ಸಿಗುವುದಿಲ್ಲ. ಒಬ್ಬರು ಇನ್ನೊಬ್ಬರನ್ನು ಮಾತನಾಡಿಸುವುದಿರಲಿ ಕಾಣುವುದೂ ಕಷ್ಟ. ಇಡೀ ಮನೆ ತನಗೆ ತಾನೇ ಬುರುಕಾ ಹಾಕಿ ಕೂತಂತೆ ಭಾಸವಾಗುತ್ತದೆ.

ಡಾ. ರಮೇಶ್ ಮತ್ತು ಅನು ಅವರ ಮನೆಯಲ್ಲಿ ಆಕರ್ಷಕವಾಗಿರುವುದು ಮನೆಯ ಮುಂದಿನ ಹಸುರಿನ ಹಾಸು ಮತ್ತು ಗಿಡಗಳು, ಮರಗಳು, ಚಿಲಿಪಿಲಿ ಗುಟ್ಟುವ ತರಾವರಿ ಹಕ್ಕಿಗಳು. ಇಲ್ಲಿ ದಾಳಿಂಬೆ, ನಿಂಬೆ ಗಿಡ, ನುಗ್ಗೆಕಾಯಿ ಮರಗಳು, ದಾಸಿವಾಳ ಮತ್ತು ಕಣಗಲೆ ಗಿಡಗಳು ಇವೆ. ಅವರ ಕಾಂಪೌಂಡ್ ಒಳಗೆ ನಿಂತಾಗ ನಾವು ಒಂದು ಮರುಭೂಮಿಯಲ್ಲಿದ್ದೇವೆ ಎಂಬ ವಿಚಾರ ಮರೆತುಹೋಗುತ್ತದೆ. ಅಂದಹಾಗೆ ಈ ದೇಶದ ಒಳನಾಡಿನಲ್ಲಿ ನವೆಂಬರ್ ತಿಂಗಳಿಂದ ಮೇ ತಿಂಗಳಿನವರೆಗೆ ಹವಾಮಾನ ಒಂದು ಹದದಲ್ಲಿ ಇದ್ದು ಆಮೇಲೆ ಕಡು ಬೇಸಿಗೆ ಶುರುವಾಗುತ್ತದೆ. ಬೇಸಿಗೆಯಲ್ಲಿ ನೀರುಣಿಸಿದರೂ ಬಿಸಿಲಿನ ಝಳಕ್ಕೆ ಒಣಗಿದ ಮರ ಗಿಡಗಳು ಚಳಿಗಾಲಕ್ಕೆ ಮತ್ತೆ ಚಿಗುರುತ್ತವೆ ಎಂದು ಕೇಳಿದಾಗ ಖುಷಿಯಾಯಿತು. ನಾವು ಇಲ್ಲಿ ತಂಗಿದ್ದಾಗ ಅಲೈನ್ ನಗರದಲ್ಲಿ ಒಂದು ರಾತ್ರಿ ವಿಪರೀತ ಬಿರುಗಾಳಿ, ಗುಡುಗು ಸಿಡಿಲಿನೊಂದಿಗೆ ಹುಯ್ದ ಆಲಿಕಲ್ಲು ಮಳೆ ಗಾಬರಿಹುಟ್ಟಿಸಿತು. ಒಂದೊಂದು ಅಲಿ ಕಲ್ಲು ಒಂದು ಟೆನಿಸ್ ಬಾಲ್ ಅಳತೆಗಿಂತ ಹೆಚ್ಚಿದ್ದು ಕೆಲವು ಒಂದು ಇಟ್ಟಿಗೆ ಗಾತ್ರದ್ದಾಗಿದ್ದು ಬೀಸುವ ಬಿರುಗಾಳಿಯಲ್ಲಿ ರಮೇಶ್ ಅವರ ಮನೆಯ ಕೆಲವು ಸೆಕ್ಯೂರಿಟಿ ಕ್ಯಾಮರಾಗಳನ್ನು, ಹೂವಿನ ಕುಂಡಗಳನ್ನು ಒಡೆದು ಚೂರು ಮಾಡಿದವು. ಅಲೈನ್ ನಗರದಲ್ಲಿ ಮರುದಿನ ಜಜ್ಜಿ ಹೋದ ಕಾರುಗಳನ್ನು, ಪುಡಿಯಾದ ಗಾಜುಗಳನ್ನು ನೋಡಿ ಚಕಿತರಾದೆವು. ರಸ್ತೆಗಳಲ್ಲಿ ನೀರು ನಿಂತು, ಚರಂಡಿಗಳು ರಭಸದ ನದಿಗಳಾಗಿದ್ದವು. ಸರಕಾರದ ಆದೇಶದಂತೆ ಒಂದೆರಡು ದಿನ ಎಲ್ಲ ಮನೆಯಲ್ಲೇ ಉಳಿಯಬೇಕಾಯಿತು. ಈ ರೀತಿಯ ಅನಿರೀಕ್ಷಿತ ಮಳೆ, ಫ್ಲಾಶ್ ಫ್ಲಡ್ ಇಲ್ಲಿ ಆಗಾಗ್ಗೆ ಬರುವುದು ಉಂಟು. ನಾನು ವಾಟ್ಸಾಪಿನ ವಿಡಿಯೋ ಚಿತ್ರಗಳನ್ನು ಹಿಂದೆ ನೋಡಿದ್ದೆ. ರಮೇಶ್ ದಂಪತಿಗಳು ತಿಳಿಸಿದಂತೆ ಈ ರೀತಿಯ ಅತಿಯಾದ ಪ್ರಕೃತಿ ವಿಕೋಪ ವಿರಳ. ಅದರ ಮಧ್ಯೆ ನಾವಲ್ಲಿದ್ದು ಪಡೆದ ಅನುಭವ ನಮ್ಮ ಪಾಲಿಗೆ ವಿಶೇಷವಾಗಿತ್ತು. ಇಂಗ್ಲೆಂಡಿನಲ್ಲಿ ಸದಾ ಸುರಿಯುವ ಮಳೆಯನ್ನು ತಪ್ಪಿಸಿಕೊಂಡು ಮರುಭೂಮಿಗೆ ಹೋದರೂ ನಮ್ಮ ದುರಾದೃಷ್ಟಕ್ಕೆ ಅಲ್ಲೂ ಮಳೆ ಬರಬೇಕೆ? ಇನ್ನೊಂದು ಸ್ವಾರಸ್ಯಕರವಾದ ಸಂಗತಿ; ಈ ಸಂಯುಕ್ತ ಅರಬ್ ರಾಷ್ಟ್ರಗಳಲ್ಲಿ 'ಕ್ಲೌಡ್ ಸೀಡಿಂಗ್' ಎಂಬ ನೂತನ ತಂತ್ರಜ್ಞಾನದಲ್ಲಿ ವಿಶೇಷವಾದ ವಿಮಾನದಲ್ಲಿ ಮೇಲೇರಿ ತಮ್ಮ ಆಕಾಶದಲ್ಲಿ ಹಾದು ಹೋಗುತ್ತಿರುವ ದಟ್ಟ ಮೋಡಗಳ ಮೇಲೆ ಕೆಲವು ರಾಸಾಯನಿಕ ಲವಣೆಗಳನ್ನು ಉದುರಿಸಿ ಆವಿಗಟ್ಟಿರುವ ಮೋಡವನ್ನು ಕರಗಿಸಿ ಮಳೆಬೀಳುವಂತೆ ಮಾಡುತ್ತಾರೆ. ಈ ರೀತಿಯ ಕೃತಕ ಮಳೆ ಬರಿಸುವ ಪ್ರಯತ್ನವನ್ನು ಆಗಾಗ್ಗೆ ಮಾಡುತ್ತಾರೆ ಎಂದು ತಿಳಿದು ಅಚ್ಚರಿಗೊಂಡೆ. ಪ್ರಕೃತಿಗೆ ತನ್ನದೇ ಆದ ನಿಯಮಗಳಿವೆ, ಅದನ್ನು ಹತ್ತಿಕ್ಕಿ ಮನುಷ್ಯ ತನ್ನ ಅನುಕೂಲಕ್ಕೆ ಹಸ್ತಾಕ್ಷೇಪ ಮಾಡುವು ಸರಿಯೇ? ಅದರ ಪರಿಣಾಮಗಳೇನು? ಎಂಬ ನೈತಿಕ ಪ್ರಶ್ನೆಗಳು ನನ್ನನ್ನು ಕಾಡಿವೆ.

ನಮ್ಮ ಗೆಳೆಯರಾದ ರಮೇಶ್ ದಂಪತಿಗಳು ತಮ್ಮ ಹಸಿರಾದ ಅಲೈನ್ ನಗರವನ್ನು ಕೂಲಂಕುಷವಾಗಿ ನಮಗೆ
ಪರಿಚಯಿಸಿದರು. ಅಲೈನ್ ಮೈಸೂರು ಮತ್ತು ಧಾರವಾಡದ ರೀತಿಯಲ್ಲಿ ಸಾಂಸ್ಕೃತಿಕ ಕೇಂದ್ರ. ಇಲ್ಲಿ ಸ್ಥಳೀಯ ಎಮಿರಾಟಿಗಳೇ ಹೆಚ್ಚು. ದುಬೈ ಅಬುದಾಬಿ ನಗರದಷ್ಟು ದಟ್ಟವಾಗಿಲ್ಲ ಬದಲಾಗಿ ಮೈಸೂರಿನಂತೆ ವಿಶಾಲವಾಗಿ ಹಬ್ಬಿಕೊಂಡಿದೆ. ಈ ಊರ ಸರಹದ್ದಿನ ಒಳಗೇ ಇರುವ ಮೂರು ಸಾವಿರ ಅಡಿ ಎತ್ತರದ ಝಬೀಲ್ ಹಫೀತ್ ಎಂಬ ಬೆಟ್ಟ ಮೈಸೂರಿನ ಚಾಮುಂಡಿಬೆಟ್ಟವನ್ನು ನೆನಪಿಗೆ ತರುವಂತಿದೆ. ಇಲ್ಲಿ ಯಾವುದೇ ಕಟ್ಟಡವನ್ನು ಮೂರು ಅಂತಸ್ತಿನ ಮೇಲೆ ಕಟ್ಟುವಂತಿಲ್ಲ. ಎಲ್ಲ ಕಟ್ಟಡಗಳ ವಿನ್ಯಾಸ ಸ್ಥಳೀಯ ಅರಬ್ ಶೈಲಿಯಲ್ಲಿ ಕಟ್ಟಲಾಗಿದ್ದು ಸುಂದರವಾಗಿದೆ. ನಗರದ ಬಹುಪಾಲು ರಸ್ತೆಗಳು ವಿಶಾಲವಾದ ಶುಭ್ರವಾದ ಜೋಡಿರಸ್ತೆಗಳು. ರಸ್ತೆಗಳ ಬದಿಯಲ್ಲಿ ಸಾಲು ಮರಗಳು ಮತ್ತು ಸಾಕಷ್ಟು ಹೂವಿನ ಗಿಡಗಳು ಇದ್ದು ಸುಂದರವಾಗಿದೆ. ದುಬೈನಲ್ಲಿ ಕಾಣುವ ಆಧುನಿಕ ಗ್ಲಾಸ್ ಮತ್ತು ಸ್ಟೀಲ್ ಬಳಸಿ ಕಟ್ಟಿರುವ ಸ್ಕೈ ಸ್ಕ್ರೇಪರ್ ಕಟ್ಟಡಗಳು ಇಲ್ಲಿ ಕಾಣುವುದಿಲ್ಲ. ಅರಬ್ ದೊರೆಗಳು ತಮ್ಮ ಎರಡನೇ ಮನೆಯನ್ನು, ನಿವೃತ್ತ ಪ್ರತಿಷ್ಠಿತರು ದೊಡ್ಡ ಬಂಗಲೆಗಳನ್ನು ಕಟ್ಟಿಕೊಂಡಿದ್ದಾರೆ. ಇಲ್ಲಿ ಎಲ್ಲ ವಾಹನ ಚಾಲಕರು ನಿಯಮವನ್ನು ಪಾಲಿಸುತ್ತಾರೆ, ಬೆಂಗಳೂರಿನ ರಸ್ತೆಯಲ್ಲಿ ಕಾಣುವ ಅಸಹನೆ, ನುಗ್ಗಾಟ, ಕರ್ಕಶಗಳಿಲ್ಲ. ವಾಹನ ಓಡಿಸುವವರು ನಮ್ಮ ಇಂಡಿಯಾ ಪಾಕಿಸ್ತಾನದ ಡ್ರೈವರ್ಗಳೇ, ಇವರೆಲ್ಲ ಅಂತಹ ಸುಶಿಕ್ಷಿತರಲ್ಲ. ನಮ್ಮ ಡ್ರೈವಿಂಗ್ ಶೈಲಿ, ಸ್ವಭಾವ ಅಲ್ಲಿಗೂ ಇಲ್ಲಿಗೂ ಹೇಗೆ ಬದಲಾಗಿದೆ ಎಂಬ ಆಲೋಚನೆಗಳು ನನ್ನ ಮನಸ್ಸಿನಲ್ಲಿ ಮೂಡಿದವು. ವ್ಯತಾಸ ಇಷ್ಟೇ; ಇಂಡಿಯದಲ್ಲಿ ಲಂಚಕೋರತನವಿದೆ, ಶಿಕ್ಷೆ ವಿಧಿಸಲು ಸಾಧ್ಯವಿಲ್ಲ, ವಿಪರೀತ ಜನಸಂದಣಿ, ನಮ್ಮ ಮಹಾ ನಗರಗಳು ತೀವ್ರ ಗತಿಯಲ್ಲಿ ಹತೋಟಿ ತಪ್ಪಿ ಬೆಳೆಯುತ್ತಿವೆ, ರಸ್ತೆಯನ್ನು ಹಿಗ್ಗಿಸಲು ಸಾಧ್ಯವಿಲ್ಲ, ಹಿಗ್ಗಿಸಿದರೆ ಇನ್ನು ಹೆಚ್ಚು ವಾಹನಗಳು ಬಂದು ಸೇರಿಕೊಳ್ಳುತ್ತವೆ. ಮೋಟಾರ್ ಬೈಕುಗಳು, ಆಟೋ ರಿಕ್ಷಾಗಳು, ಕಾರುಗಳು, ಓಲಾ ಊಬರ್ ಟ್ಯಾಕ್ಸಿಗಳು, ಬಸ್ಸುಗಳು, ಲಾರಿಗಳು ಹೀಗೆ ರಸ್ತೆಯಲ್ಲಿ ತರಾವರಿ ವಾಹನಗಳಿವೆ. ಎಲ್ಲರಿಗೂ ಅವಸರ, ಶಿಸ್ತಿನ ಬಗ್ಗೆ ತಿಳುವಳಿಕೆ ಇಲ್ಲ, ಇದ್ದರೂ ಪಾಲಿಸುವುದಿಲ್ಲ. ಒಟ್ಟಾರೆ ಅವ್ಯವಸ್ಥೆಯನ್ನು ಒಪ್ಪಿಕೊಂಡು ಬದುಕುತ್ತಿದ್ದೇವೆ. ಬೆಂಗಳೂರಿನಲ್ಲೇ ಎಲ್ಲಾ ಬೆಳೆವಣಿಗೆಯನ್ನು ಉತ್ತೇಜಿಸುವ ಬದಲು ಡಿಸ್ಟ್ರಿಕ್ಟ್ ಕೇಂದ್ರಿತ ಬೆಳವಣಿಗೆ ನಡೆಯಬೇಕಾಗಿದೆ. ಆಯೋಜಕರಿಗೆ ದೂರ ದೃಷ್ಟಿ ಬೇಕಾಗಿದೆ. ಭಾರತ ಆರ್ಥಿಕ ಪ್ರಗತಿಯನ್ನು ದಾಖಲಿಸಿದ್ದರೂ ಅದು ಇನ್ನೂ ಅಭಿವೃದ್ದಿಗೊಳ್ಳಬೇಕಾದ ದೇಶ.

***

ಮುಂದುವರೆಯುವುದು…. ಈ ಬರಹದ ೨ನೇ ಭಾಗವನ್ನು ಮುಂದಿನ ಶುಕ್ರವಾರ ನಿರೀಕ್ಷಿಸಿ

ಸಂಧ್ಯಾದೀಪಗಳ ದಾರಿಯಲ್ಲಿ

ಈ ವಾರದ ಸಂಚಿಕೆಯಲ್ಲಿ ಬೆಂಗಳೂರಿನ ನಿವೃತ್ತಿ-ನಂತರದ ಹಿರಿಯರ ಮನೆಯನ್ನು ಕುರಿತಾದ ನನ್ನ ಲೇಖನವನ್ನು ನಿಮ್ಮ ಮುಂದಿಡುತ್ತಿದ್ದೇನೆ. ಇಲ್ಲಿ ಕೆಲವು ಹಿರಿಯ ನಾಗರೀಕರು  ಬದುಕಿನ ಸಂಧ್ಯಾ ಕಾಲದಲ್ಲಿ ಸವಾಲುಗಳನ್ನು ಎದುರಿಸಿ ಹೇಗೆ ಪರಿಹಾರ ಕಂಡುಕೊಂಡಿದ್ದಾರೆ,  ಅವರು ಹೇಗೆ ಹೊಂದಾಣಿಕೆ ಮಾಡಿಕೊಂಡು ಬದುಕುತ್ತಿದ್ದಾರೆ 
ಮತ್ತು ಅವರ ಮುಂದಿರುವ ಆಯ್ಕೆಗಳೇನು? ಎಂಬುದನ್ನು ವಿಶ್ಲೇಷಿಸಿದ್ದೇನೆ. ಇಲ್ಲಿ ಭಾರತ ಮತ್ತು ಬ್ರಿಟನ್ನಿನ್ನ ಹಿರಿಯರ ಬದುಕನ್ನು ಒಂದಕ್ಕೊಂದು ಪರ್ಯಾಯವಾಗಿ ಇಟ್ಟು ನೋಡುವ ಪ್ರಯತ್ನ ನನ್ನದಾಗಿದೆ. ಹಿಂದೆ ನಾನು ಬರೆದ "ಬದಲಾಗುತ್ತಿರುವ ಸಮಾಜದಲ್ಲಿ ವೃದ್ಧರು' ಎಂಬ ಲೇಖನದ ಇನ್ನೊಂದು ಅಧ್ಯಾಯವೇ ಈ ಬರಹ ಎನ್ನಬಹುದು. ಬೆಂಗಳೂರಿನಲ್ಲಿ ನಾನು ಭೇಟಿನೀಡಿದ ‘ಪ್ರೈಮಸ್ ರಿಫ್ಲೆಕ್ಷನ್ಸ್’ ಎಂಬ ಹಿರಿಯರ ಮನೆಯ ಬಗ್ಗೆ ನನ್ನ ಕೆಲವು ಅನಿಸಿಕೆಗಳನ್ನು ಇಲ್ಲಿ ದಾಖಲಿಸಿದ್ದೇನೆ. ಬೆಂಗಳೂರಿನ ಇನ್ನೊಂದು ಹಿರಿಯರ ಮನೆ ‘ಸಂಧ್ಯಾದೀಪ’ ಕುರಿತಾದ ನನ್ನ ಕವನವನ್ನು ಇಲ್ಲಿ ಪ್ರಕಟಿಸಲಾಗಿದೆ. ಯೌವನ ಮತ್ತು ವೃದ್ಧಾಪ್ಯ ಇವೆರಡರ ಕೆಲವು ಅಭಿಮುಖಗಳನ್ನು ಚಿತ್ರಿಸುವ "ಅಂದು-ಇಂದು" ಎಂಬ ಡಾ. ರಘುನಾಥರ ಕವನ ಇಲ್ಲಿದೆ. ಕೊನೆಯದಾಗಿ ಪ್ರೈಮಸ್ ಹಿರಿಯರ ಮನೆಯ ಸಾಹಿತ್ಯಾಸಕ್ತ ನಿವಾಸಿಯಾದ ಪುಷ್ಪ ಅವರು ಕನ್ನಡ ರಾಜ್ಯೋತ್ಸವ ಮತ್ತು ಕರ್ನಾಟಕ ಏಕೀಕರಣದ ಹಿನ್ನೆಲೆಯನ್ನು ಕುರಿತು ಬರೆದ ಲೇಖನ ಇಲ್ಲಿದೆ. ಕನ್ನಡ ರಾಜ್ಯೋತ್ಸವವಾಗಿ ಕೆಲವು ದಿನಗಳಾಗಿವೆ, ನಾವೆಲ್ಲಾ ಇನ್ನು ಅದರ ನೆನಪಿನ ಪರವಶತೆಯಲ್ಲಿರುವಾಗ ಈ ಬರಹ ಸಮಯೋಚಿತವಾಗಿದೆ ಎಂದು ಭಾವಿಸಿ ಪ್ರಕಟಿಸಲಾಗಿದೆ.


-ಸಂ
ಫೋಟೋ ಕೃಪೆ ಗೂಗಲ್
ಸಂಧ್ಯಾ ದೀಪಗಳ ದಾರಿಯಲ್ಲಿ

ಡಾ. ಜಿ. ಎಸ್. ಶಿವಪ್ರಸಾದ್

ಪಾಶ್ಚಿಮಾತ್ಯ ದೇಶಗಳಲ್ಲಿ ನರ್ಸಿಂಗಹೋಮ್ ಎಂದರೆ ಅನಾರೋಗ್ಯದಿಂದಾಗಿ ತಮ್ಮ ಸ್ವಾವಲಂಬನೆಯನ್ನು ಕಳೆದುಕೊಂಡು ಇತರರನ್ನು ಅವಲಂಬಿಸಿ ಬದುಕುತ್ತಿರುವ ಹಿರಿಯರ ಮನೆ ಎನ್ನ ಬಹುದು. ಇದು ಖಾಸಗಿ ಅಥವಾ ಸರ್ಕಾರ ನಡೆಸುತ್ತಿರುವ ಸಂಸ್ಥೆಯಾಗಿರುತ್ತದೆ. ತಕ್ಕ ಮಟ್ಟಿಗೆ ಗಟ್ಟುಮುಟ್ಟಾಗಿರುವ ಹಿರಿಯರು ದಂಪತಿಗಳಾಗಿ ಅಥವಾ ಒಬ್ಬಂಟಿಗರಾಗಿ ತಮ್ಮ ತಮ್ಮ ಮನೆಗಳಲ್ಲಿ ವಾಸಮಾಡುವುದು ಸಾಮಾನ್ಯ. ಇನ್ನು ಕೆಲವು ಹಣವಂತರು ತಮ್ಮ ದೊಡ್ಡ ಮನೆಗಳನ್ನು ಮಾರಿಕೊಂಡು ಆಕರ್ಷಕವಾಗಿರುವ, ಸೆಕ್ಯೂರಿಟಿ ಒದಗಿಸುವ, ಹೊಟೇಲಿನಂತೆ ಹಲವಾರು ಸೌಲಭ್ಯಗಳು ಇರುವ ಬಹು ಅಂತಸ್ತಿನ ರಿಟೈರ್ಮೆಂಟ್ ಹೋಮ್ ಗಳಲ್ಲಿ ವಾಸಮಾಡುತ್ತಾರೆ.

ಭಾರತದಲ್ಲಿ ಕಳೆದ ದಶಕಗಳ ಹಿಂದೆ ಜಾಯಿಂಟ್ ಫ್ಯಾಮಲಿ ವ್ಯವಸ್ಥೆ ಇದ್ದು, ಮಕ್ಕಳು, ಮೊಮ್ಮಕಳು ಹಿರಿಯರನ್ನು ಆತ್ಮೀಯವಾಗಿ ಪ್ರೀತಿ ಗೌರವಗಳಿಂದ ನೋಡಿಕೊಳ್ಳುತ್ತಿದ್ದರು. ಅದು ಸಮಾಜದ ನಿರೀಕ್ಷೆಯಾಗಿತ್ತು, ವ್ಯವಸ್ಥೆಯ ಅಂಗವಾಗಿತ್ತು. ಹಿರಿಯರು ತಾವು ಹಿಂದೆ ಕಟ್ಟಿಸಿದ ಮನೆಗೆ ಭಾವನಾತ್ಮಕ ಕಾರಣಗಳಿಂದ ಜೋತು ಬಿದ್ದು ಸಾಯುವತನಕ ಕಷ್ಟವೋ ಸುಖವೋ ಮಕ್ಕಳ ಜೊತೆಗೇ ಬದುಕುತ್ತಿದ್ದರು. ಹೆತ್ತವರು ಆಳಿದ ಮೇಲೆ ಆ ಮನೆ, ಅಸ್ತಿ ಮಕ್ಕಳಿಗೆ ಮೊಮ್ಮಕ್ಕಳಿಗೆ ಹೋಗುತ್ತಿತ್ತು. ವಿವಾಹ ವಿಚ್ಛೇದನವನ್ನು ಸಮಾಜ ಒಪ್ಪುತ್ತಿರಲಿಲ್ಲ. ಹೀಗಾಗಿ ಹಿಂದಿನ ಕಾಲದಲ್ಲಿ ಸಂಸಾರಗಳು ಅವಿಭಾಜ್ಯ ಕುಟುಂಬಗಳಾಗಿ ಜೀವನ ನಡೆಸುತ್ತಿದ್ದವು. ಆ ತಲೆಮಾರಿಗೆ ವೃದ್ಧಾಶ್ರಮದ ಅಗತ್ಯವಿರಲಿಲ್ಲ. ಈಗಲೂ ಕೆಲವು ಸಂಸಾರಗಳು ಜಾಯಿಂಟ್ ಫ್ಯಾಮಿಲಿ ವ್ಯವಸ್ಥೆಯಲ್ಲಿ ಬದುಕುತ್ತಿವೆ. ಆದರೆ ಇಂದಿನ ಕೌಟುಂಬಿಕ ವ್ಯವಸ್ಥೆಯಲ್ಲಿ, ಬದಲಾಗುತ್ತಿರುವ ಭಾರತದಲ್ಲಿ, ಕಿರಿಯ ದಂಪತಿಗಳು ತಮ್ಮ ವೃತ್ತಿಯ ಒತ್ತಡದಿಂದಾಗಿ ಅಥವಾ ವಿದೇಶದಲ್ಲಿ ಇರಬೇಕಾದ ಪರಿಸ್ಥಿತಿಯಿಂದಾಗಿ ತಮ್ಮ ಹಿರಿಯ ತಂದೆ ತಾಯಿಯನ್ನು ನೋಡಿಕೊಳ್ಳಲು ಸಾಧ್ಯವಾಗದೇ ಇರುವ ಸನ್ನಿವೇಶಗಳಲ್ಲಿ ವೃದ್ಧಾಶ್ರಮಗಳು ಅನಿವಾರ್ಯವಾಗಿವೆ.

ಇನ್ನು ವಿದೇಶದಲ್ಲಿ ನೆಲೆಸಿರುವ ಭಾರತೀಯರು, ಕನ್ನಡಿಗರು ತಾವು ತಮ್ಮ ಸಂಧ್ಯಾ ಕಾಲದಲ್ಲಿ ಎಲ್ಲಿ ನೆಲೆಸುವುದು ಎಂಬ ದ್ವಂದದಲ್ಲಿ ಬದುಕುತ್ತಿದ್ದಾರೆ. ನಿವೃತ್ತಿ ಪಡೆದ ನಂತರ ಈ ವಿದೇಶದಲ್ಲಿ ಬದುಕುವ ಆಸಕ್ತಿ ಕೆಲವರಲ್ಲಿ ಕಡಿಮೆಯಾಗಿ ತಾಯ್ನಾಡಿನ ತುಡಿತ ಹೆಚ್ಚಾಗುವುದು ಸಹಜ. ಭಾಷೆ ಮತ್ತು ಸಾಂಸ್ಕೃತಿಕ ಪ್ರಜ್ಞೆ ಜಾಗೃತವಾಗಿರುವವರಿಗೆ ಇದು ಹೆಚ್ಚಿನ ಸಮಸ್ಯೆಯಾಗಬಹುದು. ಇಂಗ್ಲಿಷ್ ಸಂಸ್ಕೃತಿಯನ್ನು ಸಂಪೂರ್ಣವಾಗಿ ಅಪ್ಪಿಕೊಂಡು ಬದುಕುತ್ತಿರುವವರಿಗೆ ಮತ್ತು ಬಲವಾದ ಸಾಂಸಾರಿಕ ನೆಂಟುಗಳು ಭಾರತಕ್ಕಿಂತ ವಿದೇಶದಲ್ಲೇ ಹೆಚ್ಚಾಗಿರುವವರಿಗೆ ಭಾರತಕ್ಕೆ ಮರಳುವ ಹಂಬಲ ಕಡಿಮೆ ಎನ್ನಬಹುದು. ಈ ವಿಚಾರ ನಮ್ಮ ಮೊದಲನೇ ಪೀಳಿಗೆಯವರಿಗಷ್ಟೇ ಪ್ರಸ್ತುತ ಸಮಸ್ಯೆ.

ಭಾರತಕ್ಕೆ ಮರಳಿ ಬರುಲು ಇಚ್ಛಿಸುವ ಅನಿವಾಸಿಗಳು, ನಿವೃತ್ತಿಯಲ್ಲಿ ಸ್ವಲ್ಪ ಹಣ ಉಳಿಸಿಕೊಂಡವರು ಇಲ್ಲಿಯ ಚಳಿಗೆ ಬೇಸತ್ತು, ಇಳಿ ವಯಸ್ಸಿನಲ್ಲಿ ಭಾರತಕ್ಕೆ ಬಂದು ನೆಲಸ ಬಾರದೇಕೆ ಎಂದು ಆಲೋಚಿಸುತ್ತಿದ್ದಾರೆ. ಇನ್ನು ಇತ್ತೀಚಿಗೆ ನಿವೃತ್ತಿ ಪಡೆದು ಒಳ್ಳೆ ಆರೋಗ್ಯವನ್ನು ಕಾಪಾಡಿಕೊಂಡಿರುವವರು ಚಳಿಗಾಲದಲ್ಲಿ ಬ್ರಿಟನ್ನಿನ ಚಳಿಯನ್ನು ತಪ್ಪಿಸಿಕೊಂಡು ೪-೬ ತಿಂಗಳವರೆಗೆ ಭಾರತದಲ್ಲಿ ವಾಸಮಾಡುವ ಸಾಧ್ಯತೆಯನ್ನು ಕಂಡುಕೊಂಡಿದ್ದಾರೆ. ಅಲ್ಲೊಂದು ಫ್ಲ್ಯಾಟ್ ತೆಗೆದುಕೊಂಡು ಅಲ್ಲೂ-ಇಲ್ಲೂ ವಾಸವಾಗಿರುತ್ತಾ ‘ಬೆಸ್ಟ್ ಆಫ್ ಬೋತ್ ವರ್ಲ್ಡ್ಸ್’ ಎನ್ನುವ ಖುಷಿಯಲ್ಲಿ ವಾಸ ಮಾಡುತ್ತಿದ್ದಾರೆ. ಈ ಒಂದು ವ್ಯವಸ್ಥೆ ಎಲ್ಲಿಯವರಗೆ ಎಂಬ ಪ್ರಶ್ನೆ ಮೂಡುತ್ತದೆ. ನನ್ನ ಅಂದಾಜಿನಲ್ಲಿ, ಎಲ್ಲಿಯವರೆಗೆ ಸಾಧ್ಯವೋ ಅಲ್ಲಿಯವರೆಗೆ ಎನ್ನ ಬಹುದು. ಬ್ರಿಟನ್ನಿನಿಂದ ಭಾರತಕ್ಕೆ ಹಿಂದೆ ಮುಂದೆ ಪ್ರಯಾಣಿಸುವುದು ಚಿಕ್ಕ ವಯಸ್ಸಿನಲ್ಲಿ ಸರಾಗವಾದರೂ ಒಂದು ವಯಸ್ಸಾದ ಮೇಲೆ ಕಠಿಣವಾಗಬಹುದು. ಆರೋಗ್ಯ ಕೈಕೊಡಬಹುದು, ವಿಮಾನ ದರಗಳು ವರ್ಷ ವರ್ಷ ಹೆಚ್ಚಾಗುತ್ತಿದ್ದು ಒಂದು ಹಂತದಲ್ಲಿ ದುಬಾರಿ ಎನಿಸ ಬಹುದು. ಮುಂಬರುವ ಯಾವುದೋ ಒಂದು ಹಂತದಲ್ಲಿ ಈ ಹಿರಿಯರು ಎರಡು ಕಡೆ ವಾಸ ಮಾಡುವುದನ್ನು ಬಿಟ್ಟು ಒಂದೆಡೆ ನೆಲೆಸುವ ನಿರ್ಧಾರವನ್ನು ಕೈಗೊಳ್ಳಬೇಕಾಗುತ್ತದೆ.

ಹದಗೆಡುತ್ತಿರುವ ಅನಾರೋಗ್ಯದಿಂದ ತಮ್ಮ ದಿನ ನಿತ್ಯ ಬದುಕಿಗೆ ಇನ್ನೊಬ್ಬರನ್ನು ಅವಲಂಬಿಸಬೇಕಾದ ಸನ್ನಿವೇಶದಲ್ಲಿ, ಬ್ರಿಟನ್ನಿನಲ್ಲಿ ಸಾಕಷ್ಟು ಹಣ ತೆರಬೇಕಾಗುತ್ತದೆ. ನರ್ಸಿಂಗ್ ಹೋಂ ಸೇರಲು ತಮ್ಮ ತಮ್ಮ ಮನೆಗಳನ್ನು ಅಡವಿಡಬೇಕಾದ ಅನಿವಾರ್ಯವನ್ನು ಕಂಡಿದ್ದೇವೆ, ಕೇಳಿದ್ದೇವೆ. ಈ ನರ್ಸಿಂಗ್ ಹೋಮ್ ಅಥವಾ ರೆಸಿಡೆನ್ಶಿಯಲ್ ಹೋಂ ಗಳಲ್ಲಿ ಬ್ರಿಟಿಷ್ ಆಹಾರವನ್ನು ಸೇವಿಸುತ್ತಾ, ಗೊತ್ತು ಪರಿಚಯವಿಲ್ಲದ ಬೇರೊಂದು ಸಂಸ್ಕೃತಿಯ ಜನರೊಂದಿಗೆ ಬೆರೆಯುತ್ತಾ ಕೊನೆ ಘಳಿಗೆಯನ್ನು ಕಳೆಯುವುದು ಹೇಗೆ? ಎಂಬ ಚಿಂತೆ ಮೂಡುವುದು ಸಹಜವೇ. ತಮ್ಮ ತಮ್ಮ ಮನೆಗಳಲ್ಲೇ ಸಹಾಯಕ ಸಿಬಂದ್ಧಿಗಳನ್ನು ಇಟ್ಟುಕೊಂಡು ಬದುಕುವುದಕ್ಕೆ ಬಹಳ ಹಣ ಬೇಕು. ಈ ಹಿನ್ನೆಲೆಯಲ್ಲಿ ಇದರ ಅರ್ಧ ದುಡ್ಡಿಗೆ ಭಾರತದಲ್ಲಿ ಯಾವುದಾದರೂ ವೃದ್ಧಾಶ್ರಮದಲ್ಲಿ ಅಥವಾ ಫ್ಲ್ಯಾಟಿನಲ್ಲಿ ಸಹಾಯಕ ಸಿಬಂದ್ಧಿಯನ್ನು ಗೊತ್ತುಮಾಡಿಕೊಂಡು ಬದುಕಬಹುದು ಎಂಬ ಒಂದು ಆಯ್ಕೆ ನಮ್ಮ ಕಲ್ಪನೆಗೆ ಒದಗಿ ಬರುತ್ತಿದೆ. ಇದು ಸಾಧ್ಯ ಎಂದು ಕೆಲವು ಹಿರಿಯರು ತಮ್ಮ ಅನುಭವದಿಂದ ತಿಳಿಸಿದ್ದಾರೆ.

ಇದೇ ಒಂದು ಸನ್ನಿವೇಶದಲ್ಲಿ ಸಿಲುಕಿದ್ದ ನಮ್ಮ ಕನ್ನಡ ಬಳಗದ ಹಿರಿಯ ಸದಸ್ಯರು ಮತ್ತು ದಂಪತಿಗಳಾದ ಡಾ.ಅಪ್ಪಾಜಿ ಗೌಡ ಮತ್ತು ಡಾ.ಭಾನುಮತಿ ಅವರು ಬೆಂಗಳೂರಿಗೆ ತೆರಳಿ ಅಲ್ಲಿ ಉತ್ತಮ ಗುಣಮಟ್ಟದ ಸೌಲಭ್ಯ ಇರುವ ಪ್ರೈ ಮುಸ್ ರಿಫ್ಲೆಕ್ಷನ್ಸ್ ಎಂಬ ಹಿರಿಯರ ಮನೆ ಅಥವಾ ಆಶ್ರಯ ಸಂಕೀರ್ಣ ( Residential complex) ಎನ್ನಬಹುದಾದ ಸಂಸ್ಥೆಯಲ್ಲಿ ವಾಸವಾಗಿದ್ದರು. ಡಾ ಅಪ್ಪಾಜಿ ಅವರ ಅನಾರೋಗ್ಯ ಉಲ್ಪಣಗೊಂಡಾಗ ತಕ್ಕ ಮಟ್ಟಿಗೆ ಆರೋಗ್ಯವಂತರಾದ ಭಾನುಮತಿ ಆ ನಿರ್ಧಾರವನ್ನು ತೆಗೆದುಕೊಂಡು ಅಪ್ಪಾಜಿ ಅವರ ನಿಧನದ ಮುಂಚಿತ
ಹಲವಾರು ವರ್ಷಗಳನ್ನು ಗುಣಾತ್ಮಕ ಬದುಕಿನಲ್ಲಿ ಕಳೆದು ನೆಮ್ಮದಿಯನ್ನು ಪಡೆದುಕೊಂಡರು. ಈಗ ಭಾರತದಲ್ಲಿ ಆರೋಗ್ಯ ಸೌಲಭ್ಯಗಳು ಎಂದಿಗಿಂತ ಇಂದು ಚೆನ್ನಾಗಿವೆ. ಬ್ರಿಟನ್ನಿನ ರಾಷ್ಟ್ರೀಯ ಆರೋಗ್ಯ ಸಂಸ್ಥೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಕುಂದು ಕೊರತೆಗಳು ಹಿರಿಯ ನಾಗರೀಕರಿಗೆ ಅಸಮಾಧಾನವನ್ನು ಮತ್ತು ಆತಂಕವನ್ನು ಉಂಟುಮಾಡುತ್ತಿದೆ. ಹೀಗಿರುವಾಗ ಭಾರತದಲ್ಲಿ, ನಮ್ಮದೇ ನಾಡಿನಲ್ಲಿ ನಮ್ಮ ಸಂಧ್ಯಾಕಾಲವನ್ನು ಕಳೆಯುವುದು ಸಾಧ್ಯ ಎಂಬ ಅರಿವು ಉಂಟಾಗುತ್ತಿದೆ. ಎಲ್ಲ ದೇಶಗಳಲ್ಲೂ ಅಲ್ಲಲ್ಲಿಯ ಸಮಸ್ಯೆಗಳು ಇರುತ್ತವೆ. ಒಬ್ಬರಿಗೆ ಒಂದು ಆಯ್ಕೆ ಸೂಕ್ತವಾಗಿದ್ದಲ್ಲಿ ಅದು ಇನ್ನೊಬ್ಬರಿಗೆ ಅನುಕೂಲವಾಗದಿರಬಹುದು. ಹೀಗಾಗಿ ಅನಿವಾಸಿ ಹಿರಿಯರು ತಮ್ಮ ವೃದ್ಧಾಪ್ಯದಲ್ಲಿ ಎಲ್ಲಿ ಖಾಯಂ ಆಗಿ ನೆಲಸಬೇಕು ಎಂಬ ವಿಚಾರವನ್ನು ಅವರವರ ವೈಯುಕ್ತಿಕ ಅರೋಗ್ಯ, ಸಾಂಸಾರಿಕ ನೆಂಟುಗಳು, ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿಗಳು ನಿರ್ಧರಿಸುತ್ತವೆ.

ನಾನು ಕಂಡಿರುವ ಹಿರಿಯರ ಮನೆ ಸಮುಚ್ಛಯಗಳಲ್ಲಿ ಪ್ರೈಮಸ್ ಬಹಳ ಅನುಕೂಲವಾಗಿ ಉತ್ತಮ ಗುಣಮಟ್ಟದ್ದಾಗಿದೆ. ಇದು ಬೆಂಗಳೂರಿನ ಹೊರವಲಯದಲ್ಲಿದ್ದು ಪ್ರಶಾಂತವಾಗಿದೆ. ಕನಕಪುರ ರಸ್ತೆಯಲ್ಲಿರುವ ರವಿ ಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಆಸುಪಾಸಿನಲ್ಲಿದೆ. ಇಲ್ಲಿ ಒಟ್ಟಾರೆ ೧೬೩ ಫ್ಲ್ಯಾಟ್ಗಳಿವೆ. ಫ್ಲ್ಯಾಟ್ಗಳನ್ನು ಕೊಂಡು ಅಲ್ಲಿ ವಾಸವಾಗಿರಬಹುದು. ಕೆಳಹಂತದಲ್ಲಿರುವ ಭೋಜನ ಶಾಲೆಯಲ್ಲಿ ಊಟ, ಉಪಹಾರ
ಇವುಗಳ ವ್ಯವಸ್ಥೆ ಇದೆ. ಕಟ್ಟಡದ ಸುತ್ತು ವಿಹರಿಸಲು ಸಾಧ್ಯವಿದೆ, ಅಲ್ಲೇ ಒಂದು ಸಣ್ಣ ದೇವಸ್ಥಾನವಿದೆ, ಲೈಬ್ರರಿ ಇದೆ, ಈಜುಕೊಳವಿದೆ, ಮತ್ತು ಒಂದು ಸಾರ್ವಜನಿಕ ಸಭಾಂಗಣವಿದೆ. ಈ ಸಮುಚ್ಚಯದಲ್ಲೇ ಒಂದು ಸಣ್ಣ ಅರೋಗ್ಯ ಕೇಂದ್ರವಿದ್ದು, ಬೆಳಗಿನಿಂದ ಸಂಜೆಯವರೆಗೆ ಒಬ್ಬ ವೈದ್ಯರಿರುತ್ತಾರೆ, ಉಳಿದಂತೆ ಒಬ್ಬ ನಿವಾಸಿ ನರ್ಸ್ ಇರುತ್ತಾರೆ.
ಇಲ್ಲಿಯ ನಿವಾಸಿಯೊಬ್ಬರು ಆಸ್ಪತ್ರೆಗೆ ಸೇರುವ ಸಂದರ್ಭ ಉಂಟಾದಲ್ಲಿ ಈ ಸಂಸ್ಥೆಗೇ ಸೇರಿದ ಆಂಬುಲೆನ್ಸ್ ಸೌಲಭ್ಯವಿದೆ. ರೋಗಿಯನ್ನು ವರ್ಗಾಯಿಸಿ ಆಸ್ಪತ್ರೆಗೆ ನೋಂದಾಯಿಸುವ ತನಕ, ಸಂಸ್ಥೆ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೆ. ಹೀಗಾಗಿ ಮಕ್ಕಳು ಅಥವಾ ಸಂಬಂಧಿಗಳು ಬರುವವರೆಗೆ ಕಾಯುವ ಅವಶ್ಯಕತೆ ಇಲ್ಲ.

ಇಲ್ಲಿ ದೀಪಾವಳಿ, ರಾಜ್ಯೋತ್ಸವ ಸಮಾರಂಭಗಳು, ಪ್ರವಚನಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಕಳೆದ ವರ್ಷ ನನ್ನ ಪುಸ್ತಕದ ಬಗ್ಗೆ, ನನ್ನ ಸಮ್ಮುಖದಲ್ಲಿ ಒಂದು ಸಾಹಿತ್ಯ ಸಂವಾದವನ್ನು ಏರ್ಪಡಿಸಲಾಗಿತ್ತು ಎಂಬುದನ್ನು ಇಲ್ಲಿ ನೆನೆಯುತ್ತೇನೆ. ಈ ಹಿರಿಯರು ಸಂಗೀತ, ನೃತ್ಯ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರೂ ಪಾಲ್ಗೊಳ್ಳುತ್ತಿದ್ದಾರೆ ಎಂಬುದು ವಿಶೇಷವಾದ ಸಂಗತಿ.

ಡಾ. ಭಾನುಮತಿಯವರು ಉತ್ತಮ ಸಂಘಟಕರು. ಹಿಂದೆ ಅವರು ಕನ್ನಡ ಬಳಗದ ಸಕ್ರಿಯ ಅಧ್ಯಕ್ಷರಾಗಿ ಅನೇಕ ಪ್ರತಿಷ್ಠಿತ ಕಾರ್ಯಕ್ರಮಗಳನ್ನು, ಮೈಲಿಗಲ್ಲು ಸಂಭ್ರಮಗಳನ್ನು ಆಯೋಜಿಸಿದ್ದಾರೆ, ಅವರು ಬಹಳ ಕ್ರಿಯಾಶೀಲರು. ಅವರು ಬೆಂಗಳೂರಿನ ಪ್ರೈಮಸ್ ಸಂಸ್ಥೆಯಲ್ಲಿ ಇದೇ ಕ್ರಿಯಾಶೀಲತೆಯನ್ನು ಇತರರೊಂದಿಗೆ ಹಂಚಿಕೊಂಡು ಉತ್ತಮವಾದ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದಾರೆ. ಅವರ ನೇತೃತ್ವದಲ್ಲಿ ಅನೇಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಹಿರಿಯರೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಹಿರಿಯರು ಬದುಕಿನ ಪ್ರೀತಿಯನ್ನು ಉಳಿಸಿಕೊಂಡು, ಜೀವನೋತ್ಸಾಹದಲ್ಲಿ ಬದುಕುತ್ತಿರುವುದು ಶ್ಲಾಘನೀಯ. ಜೀವನದ ಸಂಧ್ಯಾಕಾಲದಲ್ಲಿ ಮೂಡುವ ಜಿಗುಪ್ಸೆ, ವೈರಾಗ್ಯ, ಒಂಟಿತನ, ಖಿನ್ನತೆಯನ್ನು ತರಬಹುದು. ಆದರೆ ಈ ಹಿರಿಯರು ತಮ್ಮ ಕಷ್ಟಗಳನ್ನು ಹತ್ತಿಕ್ಕಿ ತಮ್ಮ ಬದುಕನ್ನು ತಮಗೆ ಬೇಕಾದಂತೆ ರೂಪಿಸಿಕೊಂಡು ಖುಷಿಯಾಗಿದ್ದಾರೆ. ಇದು ಮೆಚ್ಚಬೇಕಾದ ಸಂಗತಿ. ಈ ಹಿರಿಯರಲ್ಲಿ ಒಂದು ನೆಮ್ಮದಿ ಇದೆ, ಸಂತೃಪ್ತಿ ಇದೆ ಎಂಬುದು ನನ್ನ ಗ್ರಹಿಕೆ. ಇಲ್ಲಿ ಒಬ್ಬರಿಗಿನೊಬ್ಬರು ಆಸರೆಯಾಗಿದ್ದಾರೆ. ಇಲ್ಲಿ ಪರಸ್ಪರ ಸಂಪರ್ಕ, ಪ್ರೀತಿ, ಕಾಳಜಿ ಮತ್ತು ವಿಶ್ವಾಸಗಳಿವೆ. ಎಲ್ಲರಿಗೂ ಎಲ್ಲರ ಪರಿಚಯವಿದೆ. ಒಂದು ರೀತಿ ನಮ್ಮ ಯು.ಕೆ ಕನ್ನಡ ಬಳಗದ ಸಮುದಾಯವಿದ್ದಂತೆ ಎನ್ನ ಬಹುದು. ನಾನು ಇಲ್ಲಿಗೆ ಎರಡು ಬಾರಿ ಭೇಟಿ ನೀಡಿದ್ದೇನೆ ಮತ್ತು ಇವರ ಒಡನಾಟವನ್ನು ಕಂಡಿದ್ದೇನೆ. ಅಪ್ಪಾಜಿ ಅವರು ವೀಲ್ ಚೇರಿನಲ್ಲಿ ಒಮ್ಮೆ ಭೋಜನ ಶಾಲೆಗೆ ಬಂದಾಗ ಅಲ್ಲಿಯ ಇತರ ನಿವಾಸಿಗಳು ಬಂದು ಅವರ ಆರೋಗ್ಯವನ್ನು ವಿಚಾರಿಸಿಕೊಂಡು ಆತ್ಮೀಯ ಕುಶಲೋಪರಿಯಲ್ಲಿ ತೊಡಗಿದ್ದು ನನಗೆ ಇಂದಿಗೂ ನೆನಪಿದೆ. ಇಲ್ಲಿ ಹಿರಿಯರಿಗೆ ಸಾಂಸ್ಕೃತಿಕ, ಆಧ್ಯಾತ್ಮಿಕ, ಸಾಹಿತ್ಯಿಕ ಅನುಭವ ದೊರೆಯುತ್ತಿದೆ. ಈ ರೀತಿಯ ಒಂದು ಗುಣಮಟ್ಟದ ಆತ್ಮೀಯ ಬದುಕನ್ನು ಬ್ರಿಟನ್ನಿನ ಯಾವುದೇ ನರ್ಸಿಂಗ್ ಹೋಮ್ ಗಳಲ್ಲಿ ನಿರೀಕ್ಷಿಸುವುದು ಸಾಧ್ಯವಿಲ್ಲ. ಎಲ್ಲ ಸೌಲಭ್ಯಗಳು ದೊರೆತರು ಆ ಸಾಂಸ್ಕೃತಿಕ ಕೊರತೆ ನೀಗುವುದಿಲ್ಲ ಎಂಬುದು ಸತ್ಯ.

ಬ್ರಿಟನ್ನಿನಲ್ಲಿ ಮುಂದಕ್ಕೆ ಕನ್ನಡ ಬಳಗವೇ ಒಂದು ಹಿರಿಯರ ಮನೆಯನ್ನು ಕಟ್ಟ ಬಹುದಲ್ಲವೇ? ಎಂಬ ಆಲೋಚನೆ ನನ್ನ ಮನಸ್ಸಿನಲ್ಲಿ ಹಾದುಹೋಗಿದೆ. ಅದರ ಬಗ್ಗೆ ಎಲ್ಲ ಅನಿವಾಸಿ ಹಿರಿಯರು ಚಿಂತಿಸಬೇಕಾಗಿದೆ. ನಮ್ಮ ಕನ್ನಡ ಬಳಗದ ಅದೆಷ್ಟೋ ಹಿರಿಯರಿಗೆ ಬೆಂಗಳೂರಿನಲ್ಲಿ ಹೋಗಿ ಖಾಯಂ ಆಗಿ ನೆಲೆಸುವ ಆಸೆ ಇದ್ದರೂ ಅಲ್ಲಿ ಹೋಗಿ ಬದುಕಬಲ್ಲೆವು ಎಂಬ ಆತ್ಮ ವಿಶ್ವಾಸ ಇಲ್ಲದಿರಬಹುದು ಮತ್ತು ಬ್ರಿಟನ್ನಿನಲ್ಲಿರುವ ತಮ್ಮ ಮಕ್ಕಳನ್ನು ಮತ್ತು ಮೊಮ್ಮಕ್ಕಳನ್ನು ತೊರೆದು ಹೋಗುವುದು ಕಷ್ಟವಿರಬಹುದು. ಈ ಒಂದು ಹಿನ್ನೆಲೆಯಲ್ಲಿ ಬ್ರಿಟನ್ನಿನಲ್ಲಿ ನೆಲೆಸಿರುವ ಭಾರತೀಯರೇ, ಭಾರತೀಯರಿಗಾಗಿ ನಡೆಸ ಬಹುದಾದ ನರ್ಸಿಂಗಹೋಮ್ ಗಳ, ಸಂಧ್ಯಾ ದೀಪಗಳ ಅಗತ್ಯವಿದೆ.

ನಾನು ಇಲ್ಲಿಯವರೆಗೆ 'ಸಂಧ್ಯಾದೀಪ' ಎಂಬ ಪದವನ್ನು ಹಿರಿಯರ ಮನೆ ಎಂಬುದನ್ನು ಸೂಚಿಸಲು ಒಂದು ರೂಪಕವಾಗಿ ಬಳೆಸಿದ್ದೇನೆ. ಇದಕ್ಕೆ ಇನ್ನೊಂದು ಕಾರಣವಿದೆ. ನನ್ನ ತಾಯಿ ರುದ್ರಾಣಿ ಅವರು ೩೦ ವರ್ಷಗಳ ಹಿಂದೆಯೇ ಸಂಧ್ಯಾದೀಪ ಎಂಬ ವೃದ್ಧಾ ಶ್ರಮವನ್ನು ಬೆಂಗಳೂರಿನಲ್ಲಿ ಹುಟ್ಟು ಹಾಕಿದ್ದು ಅದು ಇಂದಿಗೂ ವೃದ್ಧರಿಗೆ ಆಶ್ರಯ ನೀಡುತ್ತಾ ಬಂದಿದೆ. ಆ ಸಂಸ್ಥೆಗೆ ನಾನು ಪ್ರೀತಿಯಿಂದ ಬರೆದುಕೊಟ್ಟ ಕವನವನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ. ಈ ಒಂದು ಬರಹಕ್ಕೆ ನನ್ನ ಈ ಕವಿತೆ ಹೊಂದುವಂತಿದೆ ಎಂದು ಭಾವಿಸುತ್ತೇನೆ.

ಸಂಧ್ಯಾ ದೀಪ
ಡಾ. ಜಿ. ಎಸ್. ಶಿವಪ್ರಸಾದ್

ಪ್ರೀತಿ ವಾತ್ಸಲ್ಯದ ಸಂಧ್ಯಾದೀಪ
ಕರುಣೆಯ ಕುಡಿಯಲಿ ಉರಿಯುವ ದೀಪ
ಭರವಸೆ ನೀಡುವ ನಂದಾ ದೀಪ
ಕಾರ್ಮೋಡದ ಸಂಜೆಯ ದಾರಿಯ ದೀಪ

ಸವೆದಿಹ ಕೀಲಿಗೆ, ಮಬ್ಬಿನ ಕಣ್ಣಿಗೆ
ನಡುಗುವ ಕೈಯಿಗೆ, ಬಾಗಿದ ಬೆನ್ನಿಗೆ,
ಅಂದಿನ ತಪ್ಪಿಗೆ, ಇಂದಿನ ಮುಪ್ಪಿಗೆ
ಇನ್ನಿಲ್ಲ ಶಾಪ, ಪರಿತಾಪ

ಕಂಡರಿಯದ ಊರಿಗೆ ದೂರದ ಪಯಣ
ಬಸವಳಿದವರಿಗಿದು ಕೊನೆಯ ನಿಲ್ದಾಣ
ನಿರೀಕ್ಷೆಗೆ ಜಿಗುಪ್ಸೆಗೆ ವಿಶ್ರಾಂತಿಯ ತಾಣ
ಮಮತೆ ಆರೈಕೆಯ ಚಿಲುಮೆ ಇದು ಕಾಣ.
*
ವೃದ್ಧಾಪ್ಯದ ಬಗ್ಗೆ ಇನ್ನೊಂದು "ಅಂದು -ಇಂದು" ಎಂಬ ಪದ್ಯವನ್ನು ಇಲ್ಲಿ ಪ್ರಕಟಿಸಲಾಗಿದೆ. 

ಈ ಪದ್ಯವನ್ನು ಮೈಸೂರಿನಲ್ಲಿ ನೆಲೆಸಿರುವ ರೆಡಿಯಾಲಜಿಸ್ಟ್ ಡಾ. ರಘುನಾಥ್ ಅವರು ಅಂತರ್ಜಾಲದಲ್ಲಿ ಕಂಡ ಇಂಗ್ಲಿಷ್ ಪದ್ಯದಿಂದ ಪ್ರೇರಿತಗೊಂಡು ರಚಿಸಿದ್ದಾರೆ. ಇದನ್ನು ಹಂಚಿಕೊಂಡ ನಮ್ಮ ಬಳಗದ ಸದಸ್ಯರಾದ ಡಾ.ಮಂದಗೆರೆ ವಿಶ್ವನಾಥ್ ಅವರಿಗೆ ಕೃತಜ್ಞತೆಗಳು. ಪದ್ಯವು ಈ ಸಂದರ್ಭಕ್ಕೆ ಉಚಿತವಾಗಿದೆ ಎಂದು ಭಾವಿಸುತ್ತೇನೆ.

ಅಂದು – ಇಂದು
ಡಾ. ರಘುನಾಥ್

ಏಳುವುದೇ (ನಿದ್ದೆಯಿಂದ) ಕಷ್ಟ
ಈಗ ನಿದ್ದೆ ಮಾಡುವುದೇ ಕಷ್ಟ

ಆಗೆಲ್ಲ ಮೊಡವೆಯ ಯೋಚನೆ
ಈಗೆಲ್ಲ ಸುಕ್ಕಿನ ಯೋಚನೆ

ಅಂದು ಯಾರೂ ನಮಗೆ ಬೇಡ
ಇಂದು ಯಾರಾದರೂ ಇದ್ದರೆ ಸಾಕು

ಅಂದು ಯಾರ ಕೈ ಹಿಡಿಯಲೆಂದು
ಇಂದು ಯಾರಾದರೂ ಕೈ ಹಿಡಿದರೆ ಸಾಕೆಂದು

ಅಂದು ಸುಂದರತೆ ನೋಡುವ ತವಕಾಟ
ಇಂದು ನೋಡಿದರಲ್ಲಿ ಸುಂದರತೆ ಕಾಣುವ ಸೆಣಸಾಟ

ಅಂದು ನಾನೇ ಎಂದಿಗೂ
ಇಂದು ನನ್ನ ಸರದಿ ಎಂದಿಗೂ

ಅಂದು ಎಲ್ಲರ ಹೃದಯ ಮಿಡಿತ ನಾನೇ
ಇಂದು ಅದು ನಿಂತಿತೆಂಬ ಭಾವನೆ

*
ಕನ್ನಡ ರಾಜ್ಯೋತ್ಸವ; ಕೆಲವು ಐತಿಹಾಸಿಕ ಹಿನ್ನೆಲೆಗಳು

ಶ್ರೀಮತಿ ಪುಷ್ಪ , ಪ್ರೈಮಸ್ ಹಿರಿಯರ ಮನೆ

ಡಿ.ಎಲ್ ಪುಷ್ಪ ಅವರ ಪರಿಚಯ ಅವರ ಮಾತುಗಳಲ್ಲೇ ಹೀಗಿದೆ:
"ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ವೈದ್ಯರಾಗಿದ್ದ ನನ್ನ ತಂದೆಯವರಿಗಿದ್ದ ಕನ್ನಡ ಸಾಹಿತ್ಯದ ಆಳವಾದ ಅರಿವು ನನ್ನ ಮೇಲೆ ಪ್ರಭಾವ ಬೀರಿತು.ತಾಯಿಯವರಿಂದ ದೇವರನಾಮಗಳನ್ನು ಕಲಿತೆ. ಕನ್ನಡ ಮಾಧ್ಯಮ ದಲ್ಲಿ ಶಿಕ್ಷಣ ಪಡೆದ ನನಗೆ ಕನ್ನಡ ಕಾದಂಬರಿಗಳನ್ನು ಓದುವ ಹವ್ಯಾಸವಿತ್ತು. ಭಾವಗೀತೆಗಳನ್ನು ರೇಡಿಯೋದಲ್ಲಿ ಕೇಳಿ ಕಲಿಯುತ್ತಾ ಶ್ರೀಮತಿ ಎಚ್.ಆರ್.ಲೀಲಾವತಿಯವರ ಅಭಿಮಾನಿಯಾದೆ. ಸಂಗೀತ ಸ್ವಲ್ಪ ಗೊತ್ತು. ಮುಂದೆ ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸುವಾಗಲೂ.ಕನ್ನಡದ ಪತ್ರಗಳಿಗೆ ಕನ್ನಡದಲ್ಲೇ ಉತ್ತರಿಸುತ್ತಿದ್ದೆ. ಈಗ ಸ್ವಲ್ಪ ಮಟ್ಟಿಗಾದರೂ ಕನ್ನಡ ಓದುವ ಭಾವಗೀತೆ ಕೇಳುವ ಹಾಡುವ ಹವ್ಯಾಸಗಳು ನನ್ನ ಬಾಳನ್ನು ಮುನ್ನಡೆಸುವ ಶಕ್ತಿಗಳಾಗಿವೆ"

***

ಕರ್ನಾಟಕ ರಾಜ್ಯೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಒಂದು ಸುಧೀರ್ಘ ಹೋರಾಟದ ಕಥೆ ಇದೆ. ಅಪಮಾನನವನ್ನು ಸಹಿಸಿದೇ ಸ್ವಾಭಿಮಾನವನ್ನು ಉಳಿಸಿಕೊಳ್ಳುವಲ್ಲಿ ಕನ್ನಡ ಸಂಸ್ಕೃತಿ ಉದಯವಾಗಿದೆ. ಪಲ್ಲವ ಕ್ಷತ್ರಿಯರಿಂದ ಆದ ಅಪಮಾನವನ್ನು ಸಹಸಿಕೊಳ್ಳದೇ ಸ್ವಾಭಿಮಾನದ ಕಿಚ್ಚಿನಿಂದ "ಶರ್ಮ" ಎಂಬ ಬ್ರಾಹ್ಮಣ ಸೂಚಿಕ ಪದವನ್ನು ತ್ಯಜಿಸಿ ಖಡ್ಗ ಹಿಡಿದು ಸೈನ್ಯ ಕಟ್ಟಿ ಹೋರಾಡಿ ಜಯಶೀಲನಾದವನೇ "ಮಯೂರ ವರ್ಮಾ", ಕನ್ನಡಿಗ ರಾಜವಂಶ ಕದಂಬರ ದೊರೆ. ಒಂದು ಸಂಸ್ಕೃತಿಯಂದರೆ ಆ ಜನಾಂಗದ ಜೀವನ ವಿಧಾನ, ಅದರ ಚರಿತ್ರೆ. ಸ್ವಾಭಿಮಾನ ಹಾಗೂ ಸಮದೃಷ್ಟಿಯುಳ್ಳವರಾಗಿದ್ದು, ಶೂರರು, ಉದಾರ ಹೃದಯಗಳೂ ಆಗಿದ್ದ ಚಾಲುಕ್ಯರು, ಹೊಯ್ಸಳರು ಮತ್ತು ರಾಷ್ಟ್ರಕೂಟ ದೊರೆಗಳ ಆಳ್ವಿಕೆಯಲ್ಲಿ ಸ್ವಂತಿಕೆಯನ್ನು ಮತ್ತು ಆತ್ಮವಿಶ್ವಾಸವನ್ನು ಬೆಳಸಿಕೊಂಡು ಕರ್ನಾಟಕ ಸಂಸ್ಕೃತಿ ರೂಪುಗೊಂಡಿತು. "ಮನುಷ್ಯ ಜಾತಿ ತಾನೊಂದೆ ವಲಂ" ಎಂಬುದು ಆದಿ ಕವಿ ಪಂಪನ ಮಾತು. ಮನುಷ್ಯವರ್ಗವೆಲ್ಲ ಒಂದು ಎಂಬ ತತ್ವವನ್ನು ತಮ್ಮ ಧರ್ಮದ ಚೌಕಟ್ಟಿನಲ್ಲೆ ಕನ್ನಡ ಜನ ಕಂಡಿದ್ದಾರೆ. ದಯೆಯೇ ಧರ್ಮದ ಮೂಲವೆಂದು ಬಸವಣ್ಣ ಹೇಳಿದ್ದರೆ, ಹೊಲಯ ಹೊರಗಿಹನೇ? ಊರೊಳಗಿಲ್ಲವೇ? ಎಂದು ಪುರಂದರದಾಸರು ಹೇಳಿದ್ದಾರೆ.

ಧಾರ್ಮಿಕ ಸಮನ್ವಯವಿದ್ದ ಕನ್ನಡನಾಡಿನಲ್ಲಿ ಶೈವ, ವೈಷ್ಣ , ಭೌದ್ಧ ,ಜೈನ ಮತಗಳ ಅಭಿವೃದ್ಧಿ ಹೊಂದಿದವು. ಅಪ್ರತಿಮ ಶಿಲ್ಪಕಲೆಯನ್ನೂಳಗೊಂಡ, ಬಾದಾಮಿ, ಐಹೊಳೆ ,ಪಟ್ಟದಕಲ್ಲು, ಬೇಲೂರು, ಹಳೇಬೀಡುಗಳ ದೇವಾಲಯಗಳು ನಿರ್ಮಾಣವಾದವು. ಪುರಂದರದಾಸರಂತ ವಾಗ್ಮಿಗಳಿಗೆ ಮತ್ತು ಪಂಪ, ರನ್ನ ಜನ್ನ , ನಾಗವರ್ಮ ಮತ್ತು ಕುಮಾರವ್ಯಾಸರಂಥ ಮಹಾ ಕವಿಗಳಿಗೆ ಜನ್ಮ ಕೊಟ್ಟ ನಾಡಿದು. ವಚನ ಸಾಹಿತ್ಯದ ಮೂಲಕ ಸಾಮಾಜಿಕ ಸಾಮಾನತೆಯನ್ನು ಸಾರಿದ ಬಸವಣ್ಣ, ಅಲ್ಲಮಪ್ರಭು ,ಅಕ್ಕಮಹಾದೇವಿಯವರನ್ನು ಹೇಗೆ ಮರೆಯಲಾದೀತು? ಹೀಗೆ ಎಲ್ಲ ರಂಗಗಳಲ್ಲಿಯೂ ಉಚ್ಛ್ರಾಯ ಸ್ಥಿತಿಯಲ್ಲಿದ್ದ ಕನ್ನಡ ಪ್ರದೇಶಗಳು ವಿಜಯನಗರ ಸಾಮ್ರಾಜ್ಯ ಪತನದ ನಂತರ ಕನ್ನಡಿಗರ ಕೈ ತಪ್ಪಿ ಮುಂಬೈ, ಹೈದರಾಬಾದ್, ಮದ್ರಾಸ್ ಪ್ರಾಂತ್ಯಗಳಲ್ಲಿ ಹಂಚಿಹೋದವು. ಕನ್ನಡಿಗರು ಎರಡನೇ ದರ್ಜೆಯ ಪ್ರಜೆಗಳಾದರು. ಭೌಗೋಳಿಕವಾಗಿ ಒಂದಾಗಬೇಕಾದ ಅವಶ್ಯಕತೆ ಉಂಟಾಯಿತು. ಹೀಗಾಗಿ ೧೯ನೇ ಶತಮಾನದ ಉತ್ತರಾರ್ಧದಲ್ಲಿ ಪ್ರಾಜ್ಞರಾದವರು, ಸಾಹಿತಿಗಳು, ಕವಿಗಳು, ಕನ್ನಡ ಪತ್ರಿಕೆಗಳು, ಕನ್ನಡ ಸಂಘಟನೆಗಳು, ಕಲಾವಿದರು, ಕೃಷಿಕರು, ಸಾಮಾನ್ಯ ಜನರೆಲ್ಲರೂ ತಾವು ಒಂದುಗೂಡಬೇಕೆಂದು ಯೋಚಿಸಿ ಭಾವನಾತ್ಮಕವಾಗಿ ಹಾಗೂ ವೈಚಾರಿಕವಾಗಿ ಒಗ್ಗಟ್ಟಿನಿಂದ ಒಂದು ಚಳುವಳಿ ಪ್ರಾರಂಭಿಸಿದರು.

ಹೀಗೆ "ಕರ್ನಾಟಕ ಏಕೀಕರಣಕ್ಕಾಗಿ" ನಡೆದ ಚಳುವಳಿಯಲ್ಲಿನ ಕೆಲವು ಮುಜಲುಗಳನ್ನು ಗುರುತಿಸುವುದಾದರೆ ಭಾರತ ಸ್ವತಂತ್ರ ಹೋರಾಟದ ಜೊತೆ ಜೊತೆಗೆ ಸಮಾನಾಂತರವಾಗಿ ಕರ್ನಾಟಕ ಏಕೀಕರಣಕ್ಕಾಗಿ ಹೋರಾಟ ನಡೆಯಿತು. ಅವು ಹೀಗಿವೆ;

೧)ಪ್ರಮುಖ ಸಾಹಿತಿಗಳಾದ ಆಲೂರು ವೆಂಕಟರಾವ್ (ಕನ್ನಡ ಕುಲ ಪುರೋಹಿತ ) ಅವರನ್ನು ಏಕೀಕರಣದ ಶಿಲ್ಪಿ ಎನ್ನಬಹುದು. ೧೯೦೭/೮ ರಲ್ಲಿ ಧಾರವಾಡದಲ್ಲಿ ಕನ್ನಡ ಲೇಖಕರ ಸಮ್ಮೇಳನ ನಡೆಸಿ ಲೇಖಕರು ತಮ್ಮ ಬರಹದ ಮೂಲಕ ಏಕೀಕರಣ ಚಳುವಳಿಯನ್ನು ಬೆಳಸುವಂತೆ ಕರೆ ನೀಡಿದರು. ಅವರ ಕಾದಂಬರಿ "ಕರ್ನಾಟಕ ಗಥ ವೈಭವ "ಏಕೀಕರಣದ ಬೈಬಲ್ " ಎಂದು ಹೇಳಲಾಗುತ್ತದೆ.

೨) ಮೈಸೂರು ಸಂಸ್ಥಾನದ ರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದಿವಾನ್ ಸರ್ ಎಂ ವಿಶ್ವೇಶ್ವರಯ್ಯನವರು ೧೯೧೫ ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿ ಏಕೀಕರಣದ ಪರಿಕಲ್ಪನೆಗೆ ನಾಂದಿ ಹಾಡಿದರು.

೩) ೧೯೨೪ರಲ್ಲಿ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಹುಯಲುಗೊಳ ನಾರಾಯಣರಾಯರ "ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು" ಗೀತೆಯನ್ನು ಪ್ರಾರ್ಥನೆಗೆ ಹಾಡಲಾಯಿತು. ಇದನ್ನೇ ಮುಂದೆ ಏಕೀಕರಣ ಗೀತೆಯಾಗಿ ಗುರುತಿಸಲಾಯಿತು.

೪)೧೯೨೬ರಲ್ಲಿ ಹಿಂದೂಸ್ತಾನ್ ಸೇವಾದಳದ ಎನ್. ಎಸ್ ಹರ್ಡಿಕರ್ ನೇತೃತ್ವದಲ್ಲಿ ಏಕೀಕರಣಕ್ಕೆ ಹಸ್ತಾಕ್ಷರ ಚಳುವಳಿ ನಡೆಯಿತು. ೧೯೪೭ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದಿತು. ೧೯೫೬ರಲ್ಲಿ ಭಾಷಾವಾರು ಪ್ರಾಂತ್ಯಗಳ ವಿಂಗಡಣೆಯಾಗಿ ನವಂಬರ್ ೧ನೇ ದಿನಾಂಕದಂದು ನವಮೈಸೂರು ರಾಜ್ಯ ಅಸ್ತಿತ್ವಕ್ಕೆ ಬಂದಿತು. ಮುಂದೆ ಕೆಂಗಲ್ ಹನುಮಂತಯ್ಯನವರ ಮತ್ತು ಎಸ್. ನಿಜಲಿಂಗಪ್ಪನವರ ಪ್ರಯತ್ನದಿಂದ ೧೯೭೩ರ ನವಂಬರ್ ೧ನೇ ದಿನಾಂಕ "ಕರ್ನಾಟಕ " ವೆಂದು ನಾಡಿಗೆ ನಾಮಕರಣವಾಯಿತು. ಪ್ರತಿ ವರ್ಷ ಕರ್ನಾಟಕದ ಗತ ವೈಭವ ಮತ್ತು ಸಂಸ್ಕೃತಿಯನ್ನು ನೆನೆಪಿಸುವ ಸಲುವಾಗಿ ಮಾತ್ರವಲ್ಲದೆ ಕನ್ನಡಿಗರಿಗೆ ಒಂದು ಆಸ್ಮಿತೆಯನ್ನೂ, ಅಸ್ತಿತ್ವವನ್ನು ತಂದುಕೊಟ್ಟ ಎಲ್ಲ ಮಹನೀಯರ ಸ್ಮರಣೆಗಾಗಿ ಈ ರಾಜ್ಯೋತ್ಸವ ಆಚರಣೆ ಮುಖ್ಯವಾಗುತ್ತದೆ.

ಈ ಬರಹದ ಹಸ್ತಪ್ರತಿಯನ್ನು ಟೈಪ್ ಮಾಡಿಕೊಟ್ಟ ಅನಿವಾಸಿ ಬಳಗದ ರಾಮಮೂರ್ತಿ ಅವರಿಗೆ ಕೃತಜ್ಞತೆಗಳು

*