ಮೂರನೆಯ ಚಾರ್ಲ್ಸ್ – King Charles III

ನನಗನ್ನಿಸುವಂತೆ ಅನಿವಾಸಿಯ ಬಳಗದ ಸದಸ್ಯರೆಲ್ಲರ (ಹೆಚ್ಚು-ಕಮ್ಮಿ ಎಲ್ಲರ ಅನ್ನೋಣವೇ?) ಜೀವನ ಕಾಲದಲ್ಲಿ ಇದು ಮೊದಲನೆಯ ಸಿಂಹಾಸನಾರೋಹಣ, ಈ ಶನಿವಾರ ಅಂದರೆ ನಾಳೆ 2023 ರ ಮೇ 6 ರಂದು ಜರುಗಲಿದೆ.  ಕಳೆದ 70 ವರ್ಷಗಳಿಂದ ರಾಜಕುಮಾರನಾಗಿಯೇ ಉಳಿದಿದ್ದ ಚಾರ್ಲ್ಸ್, 7 ತಿಂಗಳ ಹಿಂದೆ ರಾಣಿ ಎಲಿಜಬೆತ್ ರ ಮರಣಾನಂತರ ರಾಜನಾದರೂ, ಈ ವಾರದ ಕೊನೆಯಲ್ಲಿ ಅಧಿಕೃತ ಸಮಾರಂಭದಲ್ಲಿ ಪತ್ನಿ ಕಮಿಲಾರೊಂದಿಗೆ ಸಿಂಹಾಸನವನ್ನು ಏರಲಿದ್ದಾರೆ.  53 ಕ್ಕೂ ಹೆಚ್ಚು ಅವಧಿಯ ತಮ್ಮ ಅಪ್ರೆಂಟಿಸ್ ಅನುಭವವನ್ನು ವೃತ್ತಿಯಲ್ಲಿ ಯಶಸ್ವಿಯಾಗಿ ಬಳಸುವ ಅವಕಾಶ ಪಡೆಯಲಿದ್ದಾರೆ.  ಈ ಸಂದರ್ಭದಲ್ಲಿ ನಮ್ಮ ಅನಿವಾಸಿ ಬಳಗದ “ಡೇವಿಡ್ ಬೇಯ್ಲಿ” ಹವ್ಯಾಸಿ ಛಾಯಾಗ್ರಾಹಕರೊಬ್ಬರು, ಸುಮಾರು ಅರ್ಧ ಶತಮಾನದ ಹಿಂದೆ ತಾವು ಕಿಂಗ್ ಚಾರ್ಲ್ಸ್ ಅವರ ಜೀವನದ ಒಂದು ಭಾಗದಲ್ಲಿ ಹೇಗೆ ಹಾಯ್ದು ಬಂದರೆಂದು ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಓದುಗರಲ್ಲೂ ಹಲವರು ಈರೀತಿಯ ಅನುಭವಗಳ ಪಟ್ಟಿಮಾಡುವವರಿರಬಹುದು – ದಯವಿಟ್ಟು ಪ್ರತಿಕ್ರಿಯೆ ಬರೆದು ನಮ್ಮೊಂದಿಗೆ ಹಂಚಿಕೊಳ್ಳಿ.

ಮೊದಲಿಗೆ ರಾಜ ಚಾರ್ಲ್ಸ್ ರ ಜೀವನಕಾಲದ ಒಂದು ಝಲಕನ್ನು ನೋಡೋಣ.  ಹಲವಾರು ಅಂತರ್ಜಾಲ ತಾಣಗಳು ಈ ಚಿಕ್ಕ ಬರಹದ ಸಾಮಗ್ರಿ ಒದಗಿಸಿದ ಮೂಲಗಳು – royal.uk, britroyals.com, theguardian.com, smithsonianassociates.org ಇತ್ಯಾದಿ. – ಲಕ್ಷ್ಮೀನಾರಾಯಣ ಗುಡೂರ (ವಾರದ ಸಂಪಾದಕ)

ಮೂರನೆಯ ಚಾರ್ಲ್ಸ್ - ಕಿಂಗ್ ಚಾರ್ಲ್ಸ್ ದ ಥರ್ಡ್

ಜನಪ್ರಿಯ ರಾಣಿ ಎರಡನೆಯ ಎಲಿಜಬೆತ್ ಹಾಗೂ ರಾಜಕುಮಾರ ಫಿಲಿಪ್ (ಡ್ಯೂಕ್ ಆಫ಼ ಎಡಿನ್ಬರಾ) ಇವರ ಮೊದಲ ಮಗ.
ಸ್ಕಾಟ್ಲಂಡಿನಲ್ಲಿ ಮತ್ತು ಕೇಂಬ್ರಿಜ್ ನ ಟ್ರಿನಿಟಿ ಕಾಲೇಜಿನಲ್ಲಿ ವಿದ್ಯಾಭ್ಯಾಸ. 
ಜುಲೈ 1, 1969 ರಂದು ಪ್ರಿನ್ಸ್ ಆಫ್ ವೇಲ್ಸ್ ಪದವಿ.  ಅಲ್ಲಿಂದ ಕೇಂಬ್ರಿಜ್ ಹಾಗೂ ರಾಯಲ್ ವಿಮಾನ ದಳದಲ್ಲಿ ಕಲಿಕೆ. 1971 ರಲ್ಲಿ ಅವರ ತಂದೆ ಹಾಗೂ ತಾತನ ಹೆಜ್ಜೆಗಳನ್ನನುಸರಿಸಿ, ನೌಕಾದಳಕ್ಕೆ ಸೇರಿಕೆ.

1981 ರ ಜುಲೈ 29ರಂದು ಡಯಾನಾ ಅವರೊಂದಿಗೆ ಮದುವೆ.  ಅವರ ವೈವಾಹಿಕ ಜೀವನ ಹಲವು ಏರುಪೇರುಗಳಿಂದ ಕೂಡಿದ್ದು, 1993ರಲ್ಲಿ ಅವರಿಬ್ಬರ ಬೇರ್ಪಡುವಿಕೆಯಲ್ಲಿ ಕೊನೆಗೊಂಡಿತು.  2005 ರಲ್ಲಿ ಚಾರ್ಲ್ಸ್ ಮತ್ತೆ ಕಮಿಲಾ ಅವರನ್ನು ಮದುವೆಯಾದರು. 

ರಾಜನಾಗುವ ಮೊದಲಿನಿಂದಲೂ ಚಾರ್ಲ್ಸ್ ಸೈನ್ಯದ, ಸೈನಿಕರ ಜೊತೆಯ ತಮ್ಮ ಬಾಂಧವ್ಯವನ್ನು ಗಟ್ಟಿಯಾಗಿ ಇಟ್ಟುಕೊಂಡಿದ್ದಾರೆ.  ಹಲವಾರು ಚಾರಿಟಬಲ್ ಸಂಸ್ಥೆಗಳ ಪೋಷಕನಾಗಿ, ಅವುಗಳ ಕೆಲಸವನ್ನು ಪ್ರೋತ್ಸಾಹಿಸಿಕೊಂಡು ಬಂದಿದ್ದಾರೆ.  ವೇಲ್ಸ್ ಹಾಗೂ ಸ್ಕಾಟ್ಲಂಡ್ ಗಳ ಮೇಲಿನ ಅವರ ಪ್ರೀತಿ ಸುಲಭವಾಗಿ ಕಂಡುಬರುವಂಥದ್ದು. ಇವೆಲ್ಲದರೊಂದಿಗೆ ಚಾರ್ಲ್ಸ್ ರ ನಿಸರ್ಗ ಪ್ರೇಮ, ಅವರನ್ನು ಹಲವಾರು ಜಾಗತಿಕ ಹಾಗೂ ಸ್ಥಳೀಯ ಸವಾಲುಗಳೊಂದಿಗೆ ಸೆಣಸುವ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡಿಸಿದೆ.  ಸುಸ್ಥಿರ ಭವಿಷ್ಯ (sustainable future), ಅಭಿವೃದ್ಧಿಗಾಗಿ ಅವರ ಹೋರಾಟ ಮುಂದುವರೆದಿದೆ.

ಮೂರನೆಯ ಚಾರ್ಲ್ಸ್, ಯುನೈಟೆಡ್ ಕಿಂಗ್ಡಮ್ ನ 22ನೆಯ ಸಿಂಹಾಸನಾಧೀಶ / ರಾಜ.  ಮುತ್ತಾತ ಐದನೆಯ ಜಾರ್ಜ್ ರಿಂದ ಸ್ಥಾಪಿತವಾದ ವಿಂಡ್ಸರ್ ಮನೆತನದ 6ನೇ ರಾಜ.  ಆಸ್ಟ್ರೇಲಿಯಾ, ನ್ಯೂಜಿಲಂಡ್, ಕೆನಡಾ ಸೇರಿದಂತೆ 16 ದೇಶಗಳ ರಾಜಪಟ್ಟ (ನೇರ ಆಡಳಿತವಿಲ್ಲದ ಸ್ವತಂತ್ರ ದೇಶಗಳು). 54 ಸ್ವತಂತ್ರ ದೇಶಗಳ ಸದಸ್ಯತ್ವದ ಕಾಮನ್ ವೆಲ್ತ್ ಕೂಟದ ಮುಖ್ಯಸ್ಥ.  
ಅತ್ಯಂತ ಜನಪ್ರಿಯ ರಾಣಿಯಾಗಿ 70 ವರ್ಷಕ್ಕೂ ಹೆಚ್ಚು ಕಾಲ ಇಲ್ಲ-ಸಲ್ಲದ ಕಾಂಟ್ರೋವರ್ಸಿಗಳಿಲ್ಲದೇ ’ರಾಜ್ಯಭಾರ’ ಮಾಡಿದ ಎರಡನೆಯ ಎಲಿಜಬೆತ್ ರಾಣಿಯ ಉತ್ತರಾಧಿಕಾರಿಯಾಗಿ ಸಿಂಹಾಸನವನ್ನೇರುವುದು ಸುಲಭದ ಮಾತಲ್ಲ.  ಹಾಗೆಯೇ ಸುರಳೀತವಾಗಿ ಹೊಸ ರಾಜನ ರಾಜ್ಯಾಡಳಿತವೂ ನಡೆಯಲೆಂದು ಹಾರೈಸೋಣ. 

-ಲಕ್ಷ್ಮೀನಾರಾಯಣ ಗುಡೂರ.

*********************************************************

ನಾನು ರಾಯಲ್ ಫೋಟೋಗ್ರಾಫರ್ (ಅನಧಿಕೃತ) ಆದ ದಿನ! - ಡಾ. ಶ್ರೀವತ್ಸ ದೇಸಾಯಿ
ಇದೇ ವಾರ ಲಂಡನ್ನಿನಲ್ಲಿ ಮೂರನೆಯ ಕಿಂಗ್ ಚಾರ್ಲ್ಸ್ ನ ಪಟ್ಟಾಭಿಷೇಕ ನಡೆಯಲಿದೆ. ರಾಣಿ ಎಲಿಝಬೆತ್ ಪಟ್ಟಕ್ಕೇರಿದ ವರ್ಷ
1952. ಆಗ ನಾಲ್ಕು ವರ್ಷದವನಾಗಿದ್ದ ಆತ ಈ ದಿನಕ್ಕಾಗಿ ಎಪ್ಪತ್ತು ವರ್ಷಗಳೇ ಕಾಯ್ದಿರ ಬಹುದು. ಆತನ ’ಹೆಡ್ ಅಂಡ್
ಶೋಲ್ಡರ್’ ಫೋಟೋ ತೆಗೆದು ನನ್ನನ್ನೊಬ್ಬ ಅನಧಿಕೃತ ಫೋಟೋಗ್ರಾಫರ್ ಅಂತ ನಾನೇ ಅಂದುಕೊಳ್ಳುತ್ತ ನಾನು 45
ವರ್ಷಗಳಿಂದ ಈ ದಿನಕ್ಕಾಗಿ ಕಾಯುತ್ತಿದ್ದೇನೆ ಅಂದರೆ ಬರೀ ಉಡಾಫೆ ಅಂದುಕೊಳ್ಳದೆ ಆ ಕಥೆಯನ್ನು ಕೇಳಿ ಆಮೇಲೆ ಹೇಳಿರಿ!

ರೆಡ್ ಲೆಟ್ಟರ್ ಡೇ, ಜೂಲೈ, 1978.
ಹದಿನೈದನೆಯ ಶತಮಾನದಿಂದಲೂ ಹಬ್ಬದ ದಿನಗಳ ಪ್ರಥಮಾಕ್ಷರವನ್ನು ಕೆಲೆಂಡರಿನಲ್ಲಿ ಕೆಂಪು ಅಕ್ಷರಗಳಿಂದ ಮುದ್ರಿಸುವ ಈ ರೀತಿಯ ಪರಿಪಾಠ ಪ್ರಿಂಟರ್ ವಿಲಿಯಮ್ ಕ್ಯಾಕ್ಸ್ಟನ್ ಶುರುಮಾಡಿದ ಕಾಲದಿಂದ ಬಂದಿದೆ ಅಂತ ಪ್ರತೀತಿ.
ನನ್ನ ಪಾಲಿಗೆ ಆ ದಿನ ಅಂಥದೊಂದು ದಿನ. ಒಂದು ಕೆಂಪು ಹೆಲಿಕಾಪ್ಟರನ್ನು ತಾನೇ ಪೈಲಟ್ ಆಗಿ ನಡೆಸಿಕೊಂಡು ಯು ಕೆ ನ ವೇಲ್ಸ್ ಪ್ರಾಂತದ ಮರ್ಥರ್ ತಿಡ್ಫಿಲ್ ಎನ್ನುವ ಊರಿನ ’ಪ್ರಿನ್ಸ್ ಚಾರ್ಲ್ಸ್ ಆಸ್ಪತ್ರೆ’ಯ ಖಾಲಿ ಕಾರ್ ಪಾರ್ಕಿನಲ್ಲಿ ಬಂದಿಳಿದಾಗ ರೆಡ್ ಲೆಟ್ಟರ್ ಡೇ ಆಯಿತು.  ಅಷ್ಟೇ ಏಕೆ, ಆತನ ಹೆಸರಿನಲ್ಲಿ ನಾಮಕರಣವಾಗಿ ಅದನ್ನು ಅಧಿಕೃತವಾಗಿ ಉದ್ಘಾಟನೆ ಮಾಡಿಸಿದ ಆಸ್ಪತ್ರೆಯ ಸಿಬ್ಬಂದಿ ಮತ್ತು ಅಲ್ಲಿ ನೆರೆದ ನೂರಾರು ಜನರಿಗೂ ಅದು ಮರೆಯಲಾರದ ದಿನ. ಆಗ ಮೋಬೈಲ್ ಕ್ಯಾಮರಾಗಳು ಹುಟ್ಟಿರಲಿಲ್ಲ. ಅದೇ ಆಸ್ಪತ್ರೆಯಲ್ಲಿ ಎರಡು ವರ್ಷಗಳಿಂದ ಜೂನಿಯರ್ ಡಾಕ್ಟರ್ ಆಗಿ ಕೆಲಸ ಮಾಡುತ್ತಿದ್ದ ನಾನು ಒಂದು ಹಳೆಯ ಮಾದರಿಯ ಅಶಾಯಿ ಪೆಂಟಾಕ್ಸ್ Asahi Pentax ಕ್ಯಾಮರಾ ಹಿಡಿದು ಆತನ ಒಂದು ಚಿತ್ರವನ್ನಾದರೂ ಸೆರೆ ಹಿಡಿಯಲು ಕಾತುರನಾಗಿದ್ದೆ. ರಾಜ ಕುಮಾರ ಅಂದ ಮೇಲೆ ಸಾಕಷ್ಟು ಸೆಕ್ಯೂರಿಟಿ ಇತ್ತಾದರೂ ಈಗಿನಷ್ಟು ಇರಲಿಲ್ಲ. ಆದರೂ ನಿಯಮಾವಳಿಗಳ (protocol) ಪ್ರಕಾರ ಫ್ಲಾಷ್ ಫೋಟೋಗೆ ಕಡ್ಡಾಯವಾಗಿ ನಿಷೇಧ. ಅದು ನನಗೆ ಸ್ವಲ್ಪ ನಿರಾಶೆಯನ್ನುಂಟು ಮಾಡಿದರೂ ನನ್ನ ಅದೃಷ್ಟವನ್ನು ಪರೀಕ್ಷಿಸಲು
ಸಿದ್ಧನಾದೆ.

ನನಗೂ ಫೋಟೋಗ್ರಾಫಿಗೂ ಅಂಟಿದ ನಂಟು ...
ಎಲಿಝಬೆತ್ ರಾಣಿ ಪಟ್ಟಕ್ಕೆ ಬಂದಾಗ ನಾವು ಊಟಿಯಲ್ಲಿ ವಾಸಿಸುತ್ತಿದ್ದೆವು. ಆಗ ನನಗೆ ಆರುವರ್ಷ, ನನ್ನ ಅಣ್ಣನಿಗೆ ಎಂಟು
ವರ್ಷ ವಯಸ್ಸಿರಬಹುದು. ನಮಗೆ ಮೊದಲಿನಿಂದಲೂ ಫೋಟೋ ತೆಗೆಯ ಬೇಕೆಂದು ತವಕ. ನನ್ನಣ್ಣ ಮತ್ತು ನಾನು ತಂದೆಯವರಿಗೆ
ಕಾಡಿ, ಬೇಡಿ ಒಂದು ಫುಲ್ ವ್ಯೂ ಕ್ಯಾಮರವನ್ನು ಅದೇ ಸಮಯಕ್ಕೆ ಗಿಟ್ಟಿಸಿದ್ದೆವು. ಆಗ ಬ್ಲಾಕ್ ಅಂಡ ವೈಟ್ ಫೋಟೊ ತೆಗೆದು,
ಊರಲ್ಲಿದ್ದ ಒಂದೇ ಸ್ಟೂಡಿಯೋಗೆ ಕೊಟ್ಟು, ’ತೊಳೆಸಿ’ ಪ್ರಿಂಟ್ ಮಾಡಿಸಿದ ನೆನಪು ಇನ್ನೂ ಹಸಿರಾಗಿದೆ. ಆಮೇಲೆ ಕಾಲೇಜಿಗೆ
ಬಂದಾಗ ನನ್ನ ಮಿತ್ರನೊಡನೆ ಸೇರಿ ನಾವೇ ಪ್ರಿಂಟ್ ಮಾಡಿದ್ದೂ ಇದೆ. ನಂತರ ಈಗ ಡಿಜಿಟಲ್ ಯುಗ ಬಂದಾಗಿನಿಂದ ಎಲ್ಲರಂತೆ
ನಾನೂ ಒಬ್ಬ ಡೇವಿಡ್ ಬೇಯ್ಲಿ, ಅಥವಾ ಕ್ರಿಸ್ ಜಾಕ್ಸನ್ ಅನ್ನುವ ಭ್ರಮೆಯಲ್ಲಿದ್ದೇನೆ!

ಲೈಬ್ರರಿಯಲ್ಲಿ ರಾಜನ ಭೇಟಿ
ಇಂಗ್ಲಿಷ್ ನಿಘಂಟು ಬರೆದು ಪ್ರಸಿದ್ಧರಾದ ಡಾ ಸಾಮ್ಯುಎಲ್ ಜಾನ್ಸನ್ ಅವರನ್ನು ಮೂರನೆಯ ಜಾರ್ಜ್ ಅವರು ತಮ್ಮ
ಇಚ್ಛೆಯಂತೆ ರಾಣಿಯ ಲೈಬ್ರರಿಯಲ್ಲಿ 1767 ರಲ್ಲಿ ಭೆಟ್ಟಿಯಾಗಿದ್ದರು ಅಂತ ಓದಿದ ನೆನಪು. ಅದನ್ನೇ ನೆನಪಿಸುವ ಅಂದಿನ
ಘಟನೆ. ಆಗ ನಾನು ಅದೇ ಆಸ್ಪತ್ರೆಯಲ್ಲಿ ಕನ್ಸಲ್ಟಂಟ್ ಆಗಿ ಕೆಲಸ ಮಾಡುತ್ತಿದ್ದ ಡಾ ಲಾಲಾ ಎನ್ನುವ ಕಣ್ಣಿನ ತಜ್ಞರ ಕೆಳಗೆ ಕೆಲಸ
ಮಾಡುತ್ತಿದ್ದೆ. ಅವರು ಆ ದಿನ ಆಗ ಪ್ರಿನ್ಸ್ ಎಂದೇ ಕರೆಯಲಾಗುತ್ತಿದ್ದ ಚಾರ್ಲ್ಸ್ ಅವರನ್ನು ಭೇಟಿ ಮಾಡಲು ಇಚ್ಛಿಸಿದ್ದರು.
ಅದಕ್ಕೆ ಆಸ್ಪತ್ರೆಯ ಅಧಿಕಾರಿಗಳೂ ಒಪ್ಪಿದ್ದರು. ಅವರ ಜೊತೆಗೆ ನಾನೂ ಸೇರಿಕೊಳ್ಳಲೇ ಎಂದು ಹೊಂಚು ಹಾಕಿದ್ದು ಫಲಿಸಲಿಲ್ಲ.
ಪ್ರೋಟೋಕಾಲ್ ಅಂತ ಅಧಿಕಾರಿಗಳು ಅದೇ ಕೋಣೆಯಲ್ಲಿರಲು ಸಮ್ಮತಿಸಲಿಲ್ಲ.

ಅಂತೂ ಸಿಕ್ಕಿತು ಅವಕಾಶ
ನಂತರ ಹಿಸ್ ರಾಯಲ್ ಹೈನೆಸ್ ಪ್ರಿನ್ಸ್ ಚಾರ್ಲ್ಸ್ ’ತಮ್ಮ’ ಹೆಸರಿನ ಆಸ್ಪತ್ರೆಯ ವಿವಿಧ ಭಾಗಗಳಿಗೆ ಭೇಟಿಕೊಡಲು ಸುತ್ತಿತ್ತುರುವಾಗ ಅವರ ಹಿಂದೆ ’ಆಂಟೂರಾಜ್’ ಜೊತೆಗೆ ಸೇರಿಕೊಂಡು ಒಂದು ಕೋಣೆಯಲ್ಲಿ ಕೆಲವು ಡಾಕ್ಟರರು ಮತ್ತು ನರ್ಸ್ಗಳು ಸಾಲಾಗಿ ನಿಂತಿದ್ದನ್ನು ನೋಡಿ, ಅವರ ಹಿಂದಿನ ಸಾಲಿನಲ್ಲಿ ಆಯಕಟ್ಟಿನ ಸ್ಥಳದಲ್ಲಿ ನಿಂತುಕೊಂಡೆ. ನಮ್ಮ ಎದುರಿಗೆ ಮೂರೇ ಅಡಿ ದೂರದಲ್ಲಿ ಒಬ್ಬೊಬ್ಬರನ್ನಾಗಿ ವಿಚಾರಿಸುತ್ತ ಮಾತಾಡಿಸುತ್ತ ಬಂದ ಚಾರ್ಲ್ಸ್ ಅವರನ್ನು ಫೋಕಸ್ ಮಾಡಿ ತಲೆ ಮತ್ತು ಭುಜಗಳು (head and shoulder) ಇಷ್ಟೇ ಕಾಣಿಸುವಂಥ ನಾಲ್ಕೈದು ’ಪೋರ್ಟ್ರೇಟ್’ ಫೋಟೋಗಳನ್ನು ಕ್ಲಿಕ್ಕಿಸಿದೆ. ಆಗ ಡಿಜಿಟಲ್ ಕ್ಯಾಮರಾಗಳ ಆವಿಷ್ಕಾರ ಆಗಿದ್ದಿಲ್ಲ. ನೆಗೆಟಿವ್ ಗಾಗಿ ಫಿಲ್ಮ್ ಗಳನ್ನು ಕಂಪನಿಗೆ ಕಳಿಸಿ ಪೋಸ್ಟಿನಲ್ಲಿ ಪ್ರಿಂಟ್ ಬರುವ ವರೆಗೆ ಪ್ರಸೂತಿ ವೇದನೆ! ಎರಡು ವಾರಗಳ ನಂತರ ಪೋಸ್ಟ್ಮನ್ ಬಂದಾಗ ’ಹೆಣ್ಣೋ ಗಂಡೋ’ ಅಂತ ಕುತೂಹಲದಿಂದ ಮತ್ತು ಅವಸರದಿಂದ ಕವರನ್ನು ಬಿಚ್ಚಿ ನೋಡಿದೆ. ಫ್ಲಾಷ್ ಇಲ್ಲ ಅಂತ  1/15 ಸೆಕೆಂಡುಗಳ ಎಕ್ಸ್ ಪೋಶರ್ ಕೊಟ್ಟಿದ್ದೆ.  ಒಂದೇ ಒಂದು ಫೋಟೋ ಮಾತ್ರ ಅವರದೇ ಅನ್ನುವಷ್ಟಾದರೂ ಸ್ಪಷ್ಟವಾಗಿ ಕಾಣಿಸುವಂತಿತ್ತು. ನನಗೆ ಸ್ವರ್ಗ ಮೂರೇ ಗೇಣು! ಒಂದು ಕಾಲದಲ್ಲಿ ಆತ ಕಿಂಗ್ ಆಗುವ ದಿನವನ್ನೇ ಕಾಯುತ್ತಿದ್ದೇನೆ ಇಂದಿನ ವರೆಗೆ! ಇನ್ನುಳಿದ snaps ಕುದುರೆ ರೇಸಿನಲ್ಲಿ ಹೇಳುವಂತೆ 'also ran' ಅನ್ನುವ ಲೆಕ್ಕಕ್ಕಿಲ್ಲದವು! ಹೋಗಲಿ ಬಿಡಿ. ಆ ‘ಐತಿಹಾಸಿಕ' ಫೋಟೋ ಬಲಗಡೆ ಕೊಟ್ಟಿದೆ, ನಿಮಗಾಗಿ!(Credit: Monochrome editing by Nigel Burkinshaw)
ರೈಟ್ ರಾಯಲ್ ಖುಶಿ!
 ಆ ಫೋಟೋವನ್ನು ಎನ್ಲಾರ್ಜ್ ಮಾಡಿಸಿ, ಪೋಸ್ಟರ್ ಮಾಡಿಸಿ ನನ್ನ ಡಿಪಾರ್ಟ್ಮೆಂಟಿನಲ್ಲಿ ಇಟ್ಟಿದ್ದೆ. 1978 ರಲ್ಲಿ ಆ ಊರು ಬಿಟ್ಟು ಬಂದೆ. ಈಗ ಆ ದೊಡ್ಡ ಫೋಟೋದ ಗತಿ ಏನಾಯಿತು ಗೊತ್ತಿಲ್ಲ. ಆ ನೆಗಟಿವ್ ಮಾತ್ರ ಇನ್ನೂ ನನ್ನ ಹತ್ತಿರ ಇದೆ. ರಾಯಲ್ ಗ್ರಾಂಟ್ ಅಂತ ಒಂದು ’ಪದವಿ’ ಸಿಗುವದು ಅಷ್ಟು ಸುಲಭವಲ್ಲ. ಆ ಫೋಟೋದ ಒಂದು ಪ್ರತಿಯನ್ನು ’ಬಕ್ಕಿಂಗ್ ಹ್ಯಾಮ್ ಪ್ಯಾಲೇಸ್’ ಲಂಡನ್ ಅಂತ ಹೆಮ್ಮೆಯಿಂದ ಕಳಿಸಿದ್ದು ಏನಾಯಿತೋ ಗೊತ್ತಿಲ್ಲ. ಆದರೆ ಈ ವರ್ಷದ ವರೆಗೆ ಕಾಯ್ದಿದ್ದ ನನಗೆ ಆ ಫೋಟೋ ಕ್ಲಿಕ್ಕಿಸಿದ ದಿನವನ್ನು ನೆನೆದು ಮೈ ಪುಳಕಿತವಾಗುತ್ತಿದೆ!  ನನ್ನ ಅತ್ಯಂತ ಅದೃಷ್ಟದ ಫೋಟೋ ಅದು ಅಂತ ನೀವೂ ಒಪ್ಪ ಬಹುದೆಂದು ಊಹಿಸುತ್ತೇನೆ! ಅದಕ್ಕೆ ನನ್ನ ಕಾಪಿರೈಟಿದೆ, ಎಚ್ಚರಿಕೆ!

ಶ್ರೀವತ್ಸ ದೇಸಾಯಿ
ಡೋಂಕಾಸ್ಟರ್, ಯಾರ್ಕ್ ಶೈರ್, ಯು ಕೆ.
  (ಫೋಟೋಗಳೆಲ್ಲ ಲೇಖಕರು ಕ್ಲಿಕ್ಕಿಸಿದ್ದು. Copyright reserved.)
  (ಇದೇ ವಾರದ ಕನ್ನಡ ಪ್ರಭ ಎನ್ ಆರ್ ಐ ಆವೃತ್ತಿಯಲ್ಲಿ ಪ್ರಕಟವಾದ ನನ್ನ ಲೇಖನದ  ಪರಿಷ್ಕೃತ ರೂಪ) 

**********************************************************

ಹೀಗೊಂದು ಸಿನೆಮಾ ವಿಹಾರ, ಹಾಗೊಂದು ಹರಟೆ

ಅನಿವಾಸಿ ಬಳಗಕ್ಕೆ ನಮಸ್ಕಾರ. ಯುಗಾದಿ, ರಾಮನವಮಿ, ಹನುಮಜಯಂತಿ, ಕೋಸಂಬರಿ-ಪಾನಕ, ಮಾವು ಎಂದೆಲ್ಲ ಚೈತ್ರದ ಸಂಭ್ರಮದಲ್ಲಿ ಮಿಂದೆದ್ದಿದ್ದಾಯಿತು. ಇದೀಗ ಈಸ್ಟರ್ ನ ರಜೆಯ ದಿನಗಳು. ಬೆಳಗ್ಗೆ ಮಕ್ಕಳ ಶಾಲೆಯ ಅವಸರವಿರದ, ತಡ ರಾತ್ರಿಯ ಟಿ.ವಿ. ವೀಕ್ಷಣೆಗೆ ಸೂಕ್ತ ದಿನಗಳು. ಅದಕ್ಕೆಂದೇ ನಮ್ಮ ಅನಿವಾಸಿಯ ಹೊಸ ಬರಹಗಾರರಾದ ಪ್ರಮೋದ್ ಸಾಲಿಗ್ರಾಮ ಅವರು ನೋಡಿ ವಿಶ್ಲೇಷಿಸಿದ ಸಿನೆಮಾವೊಂದರ ಲೇಖನ ಇಂದಿನ ಸಂಚಿಕೆಯಲ್ಲಿದೆ. ನಮ್ಮಲ್ಲಿರುವ ಬಹು ಮಂದಿ ಸಿನೆಮಾಪ್ರಿಯರಿಗೆ ಇದು ಮೆಚ್ಚುಗೆಯಾದೀತೆಂಬ ಭರವಸೆಯಿದೆ. ಜೊತೆಗೆ ನನ್ನದೊಂದು ಲಘು ಹರಟೆಯೂ ಉಂಟು. ಓದಿ ಲಗೂನೆ ಒಂದೆರಡು ಕಮೆಂಟೂ ಮಾಡ್ರಿ. ಹಂಗೇ ಪ್ರಮೋದ್ ಅವರು ಹೇಳಿದ ಸಿನೆಮಾನೂ ನೋಡ್ರಿ..ಅವರ ಅನಿಸಿಕೆಗಳ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಗಳನ್ನೂ ಹಂಚಗೊಳ್ರಿ. – ಸಂಪಾದಕಿ

ನಾ ಕಂಡ ವಿಡುದಲೈ – ೧

ಬರಹಗಾರ ಜೆಯಮೋಹನ್ ರವರ ಸಣ್ಣಕಥೆ ಆಧಾರಿತ ಸಿನಿಮಾ. ಮೈನಿಂಗ್ ಹೆಸರಲ್ಲಿ ಸರ್ಕಾರವೊಂದು  ಜನರಿಗೆ ಮಣ್ಣೆರಚುತ್ತಾ : ಕ್ರಾಂತಿಕಾರಿಯೋರ್ವನನ್ನು ದೇಶದ್ರೋಹಿಯಾಗಿಸಿ ; ಪೊಲೀಸ್ ಪಡೆಯೊಂದು ಅವನ ಬೆನ್ನಟ್ಟಿರುವ ಹಿನ್ನಲೆಯಲ್ಲಿ ಈ ಚಿತ್ರ . 

ಪೊಲೀಸ್ ದೌರ್ಜನ್ಯದ ಮುನ್ನಲೆಯಲ್ಲಿ ಡ್ರಾಮಾ ರಚಿಸಿ , ಕಥಾಪಾತ್ರಗಳೆಲ್ಲ ಬಂದು ಕಥೆಗೆ ನಟಿಸಿ ಹೋಗುತ್ತಾರೆ ಅಷ್ಟೇ. ಕಥೆಯೇ ಸಿನಿಮಾದ ಜೀವಾಳ . ಇದು ನಿರ್ದೇಶಕ ವೆಟ್ರಿಮಾರನ್ ಗೆ ಹೊಸದಲ್ಲ- ಅವರ ಹಿಂದಿನ ಸಿನಿಮಾ : ವಿಸಾರಣೈ ಒಂದೊಮ್ಮೆ ನೋಡಿ ಬನ್ನಿ . ಇವರು ಪಾತ್ರಗಳ ನಿಟ್ಟಿನಲ್ಲಿ ಕಥೆ ಹೇಳುವ ಕಲೆಯನ್ನ ,ಹೇಗೆ ಕರಗತ ಮಾಡಿಕೊಂಡ್ದಿದಾರೆ ಅನ್ನೋ ಆಶ್ಚರ್ಯ ನಿಮ್ಮನ್ನ ಪಕ್ಕಾ ಕಾಡುತ್ತದೆ .  ಗುಡ್ಡುಗಾಡಿನ ಗ್ರಾಮಸ್ಥರು , ಪೋಲಿಸಿನವರು , ರಾಜಕಾರಣಿ , ಮಾಧ್ಯಮದವರು, ನಾಯಕ -ನಾಯಕಿ ಎಲ್ಲರ ಮಧ್ಯದಲ್ಲೊಂದು balancing act ನಿರ್ದೇಶಕನ ಕೈಚಳಕ . ಮೊದಲ ಹತ್ತು ನಿಮಿಷದ ರೈಲು ಆಕ್ಸಿಡೆಂಟ್ ದೃಶ್ಯದಲ್ಲೇ ದೊಡ್ಡ Long -Shot  ಮುಖಾಂತರ ಕ್ಯಾಮೆರಾ ಕಣ್ಣಲ್ಲಿ ಟ್ರೈನ್ ಕಿಟಕಿಯೊ ಳಗೆ ಹೊಕ್ಕು ಗಾಯಗಳು , ಸಾವು ನೋವು , ವೇದನೆ , ಅನುಕಂಪ , ಮನುಷ್ಯತ್ವ ಎಲ್ಲವನ್ನುತೋರಿಸುತ್ತ ಕಥೆಯಲ್ಲಿ ಮುಳಿಗಿಸಿಬಿಡುತ್ತಾರೆ . ನಂತರ ಬರುವುದೆಲ್ಲಾ Bonus.  

ದಮನಿತರ ರಕ್ಷಣೆಗೆ ನಿಂತಂತೆ ಇರುವ ಕ್ರಾಂತಿಕಾರಿ ಪೆರುಮಾಳ್ ವಾದಿಯಾರ್ (ವಿಜಯ್ ಸೇತುಪತಿ)ಗೆ ಭಾಗ ಒಂದರಲ್ಲಿ ಕಡಿಮೆ ಪಾತ್ರ ಆದರೂ ಮನಸ್ಸಿಗೆ ಹತ್ತಿರವಾಗುತ್ತಾರೆ . Climax ನಲ್ಲಿ ಬರುವ ಅವರ ಭಾಗ -೨ರ ತುಣುಕುಗಳಲ್ಲಿ powerful Dialogue ನಿಂದ ಮುಂದೇನಾಗಬಹುದು ಅನ್ನೋ ಕುತೂಹಲ.  

ಪೊಲೀಸ್ ಇಲಾಖೆಯ ಸಾಮಾನ್ಯ ಪೇದೆ ಕುಮರೇಸನ್(ಸೂರಿ) ಈ ಕಥೆಯ ಮುಖ್ಯ ಪಾತ್ರಧಾರಿ .ಈ ಮುನ್ನ ಬರೀ comedian ಆಗೇ ನಟಿಸಿದಂತ ಸೂರಿ ಅವರನ್ನ ಸಿನಿಮಾದ ಹೀರೋವನ್ನಾಗಿಸಿರುವ ನಿರ್ದೇಶಕರ ಗಟ್ಟಿ ನಿರ್ಧಾರ ಮೆಚ್ಚಬೇಕಾದಂತದ್ದು . ಕಾರಣ ಪಾತ್ರಕ್ಕೆ ಬೇಕಾದ ಮುಗ್ಧತೆ , ಅಸಹಾಯಕತೆ , ಹತಾಶೆ ಇವೆಲ್ಲದರ ಮಧ್ಯೆ ನೈತಿಕತೆಯ ಮೂರ್ತರೂಪ ಸೂರಿ . ತಾನು ತಪ್ಪು ಮಾಡದೆ ಇದ್ದಾಗ ಕ್ಷಮೆ ಕೇಳಲಿಚ್ಛಿಸದ ಛಲವಾದಿ -  ಮನಸ್ಸಿಗೆ ಹತ್ತಿರವಾಗುತ್ತಾರೆ . ನಮ್ಮ - ನಿಮ್ಮಂತೆ ವ್ಯವಸ್ಥೆಯ ಮೇಲೆ ಭರವಸೆ ಇಟ್ಟಿರುವ ಕುಮರೇಸ ವಿನಾಕಾರಣ ಪನಿಶ್ಮೆಂಟ್ ತಿನ್ನುವಾಗ ಕರುಳು ಚುರುಕ್ ಅನ್ನತ್ತೆ.  ಕುಮರೇಸ- ನಾವೇ ಏನೋ ಅನ್ನಿಸೋ ಅಷ್ಟು ಆಕ್ರಮಿಸುತ್ತಾರೆ , ಪ್ರಭಾವ ಬೀರುತ್ತಾರೆ. 

ನಾಯಕಿ ತಮಿಳರಸಿಯಾಗಿ (ಭವಾನಿ ಶ್ರೀ) ನಿಮ್ಮನ್ನು ದಿಗ್ಭ್ರಮೆಗೊಳಿಸುತ್ತಾರೆ. ಪರದೆಯ ಮೇಲಿನ ಲವ್ ಟ್ರ್ಯಾಕ್ ನಮ್ಮನ್ನು ಎಲ್ಲೂ ಬೋರ್ ಹೊಡಿಸದಂತೆ ಸಮಗ್ರವಾಗಿ ಮತ್ತು ಅದ್ಭುತವಾಗಿ ಬರೆಯಲಾಗಿದೆ.ಅದಕ್ಕೆ ಕಾರಣ ನಾಯಕಿಯ ಭಾವನಾತ್ಮಕ ಆಘಾತಗಳು , ಜನಾಂಗದ ಹಿನ್ನೆಲೆ, ಫ್ಲ್ಯಾಷ್‌ಬ್ಯಾಕ್ ಎಲ್ಲವೂ ಕಥೆಗೆ ಪೂರಕವಾಗಿರೊದು. ತುಂಬಾ ಹಿಡಿಸುವ scene ಒಂದು ನೆನಪಿಗೆ  ಬರುತ್ತಿದೆ : ಸರಿಯಾಗಿ ಸ್ಪಂದಿಸದ ಕಾರಣ ನಾಯಕಿಯ ಎದುರು ಕುಮರೇಸ ಬಂದು ಬೇಷರತ್ ಕ್ಷಮೆಯಾಚಿಸಿ , ತಪ್ಪನ್ನು ಸಮರ್ಥಿಸಿಕೊಳ್ಳದೆ , ಏನನ್ನೂ ವೈಭವೀಕರಿಸದಿರುವ scene - ತುಂಬಾ Beautiful ಹಾಗೂ Rare ಕೂಡ . 

ಕುಮರೇಸನಿಗೆ ನರಕ ತೋರಿಸುವ ವ್ಯವಸ್ಥೆಯ ರೂವಾರಿಯಾಗಿ ಪೊಲೀಸ್ ಅಧಿಕಾರಿ ಓ.ಸಿ (ಚೇತನ್). ಈತ ಚಿತ್ರದ ದೊಡ್ಡ ಅಚ್ಚರಿ. ಪೋಲೀಸರ ದೌರ್ಜನ್ಯದ ಮುಖವಾಗಿ ಮತ್ತು ಕ್ರೂರಿಯಾಗಿ ಪಾತ್ರವನ್ನು ನೆನಪಿನಲ್ಲಿರುವಂತೆ ನಟಿಸಿದ್ದಾರೆ. DSP ಯಾಗಿ ಗೌತಮ್ ವಾಸುದೇವ್ ಮೆನನ್ , Chief Secretary ಆಗಿ ರಾಜೀವ್ ಮೆನನ್ Perfect . ಸಣ್ಣ ಪೋಷಕ ಪಾತ್ರಗಳು ಕೂಡ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.   

ಹೊರಗಿನವನು ಹೇಗೆ ಒಳಗಿನವನಾಗುತ್ತಾನೆ ? ನಿರಪರಾಧಿ ಹೇಗೆ ನಿಜಾಯಿತಿ ಅರಿಯುತ್ತಾನೆ ? ಸತ್ಯದಿಂದ ದೂರವಾದ ಮಾಧ್ಯಮಗಳ ಪ್ರಚಾರ , ವ್ಯವಸ್ಥಿತ ರಾಜಕೀಯ, ಮೇಲ್ದರ್ಜೆಯವರ ದರ್ಪ - ಪೊಲೀಸರನ್ನು ಹೊಕ್ಕಿದಾಗ ಜನರಿಗಾಗುವ ಸಂಕಷ್ಟಗಳು ,ಒಳ್ಳೆಯದಾವುದು - ಕೆಟ್ಟದಾವುದು ಎಂಬ ಸಂಘರ್ಷ. ಯಾರ ಪರವಾಗಿ ಹೋರಾಡುವುದು ? ಹೀಗೆ ನಾನಾ ವಿಷಯಗಳನ್ನು ಅವರವರ ದೃಷ್ಟಿಕೋನದಲ್ಲಿ ಹೇಳಿರುವ ಕಥೆ ತೆರೆಯ ಮೇಲೆ ಸ್ಪಷ್ಠವಾಗಿ ಕಾಣಸಿಗುತ್ತದೆ . ಹಾಗಾಗಿ ನಾವು ಕೂಡ ಬರೀ ಪ್ರೇಕ್ಷಕರೆನ್ನುವುದು ಮರೆತು ಹೋಗಿ ಪಾತ್ರಗಳಾಗಿರುತ್ತೇವೆ . 

ಪೊಲೀಸ್ ದೌರ್ಜನ್ಯ, Raw ಅಂಡ್ Rustic ಆಗಿ ಮೂಡಿಬರಬೇಕು ಅಂತ ಚಿತ್ರದಲ್ಲಿ ಸಾಕಷ್ಟು Aggression, Nudity, Vulgarity ಎಲ್ಲವೂ ಇದ್ದು disturb ಆಗಿಬಿಡಬಹುದು . ಹಾಗೂ ಚಿತ್ರದಲ್ಲಿ  ಅಲ್ಲಲ್ಲಿ ಡಬ್ಬಿಂಗ್ lip Sync issues ಅನ್ನಿಸ್ತು.  

ಕ್ಯಾಮೆರಾ ವರ್ಕ್ ವೇಲರಾಜ್ , ಕಲಾ ನಿರ್ದೇಶನ  Jackie, ಎಡಿಟರ್ ರಾಮರ್  ನಿಮಗೆ ದೊಡ್ಡ ಸಲಾಂ .ಇಳಯರಾಜರ ಇಂಪಾದ ಸಂಗೀತವಿದೆ. ಹಾಡೊಂದಕ್ಕೆ ಕನ್ನಡತಿ ಅನನ್ಯ ಭಟ್ ದನಿಯಿದೆ. ಸಿನಿಮಾದ geography  - locations ಎಲ್ಲವೂ ಕಥೆಗೆ ಪೂರಕ .  ಸಿನಿಮಾನೇ ಜೀವನ ಅಂತ ಇಷ್ಟಪಡುವ ಹಲವು ಜನರ ಕೈಂಕರ್ಯದ ಫಲ ವಿಡುದಲೈ  . ಪೊಲೀಸ್ ದೌರ್ಜನ್ಯದ ದೃಶ್ಯಗಳು ಬಲು ಹಿಂಸಾತ್ಮಕ - ಸ್ವತಃ ಪೊಲೀಸ್ ಒಬ್ಬಾತನಿಗೂ ತನ್ನ ಕೆಲಸದ ಮೇಲೆ ವಿಷಾದ ಮೂಡಬಹುದು . ಆದರೂ ಸಹ ಸಮುದಾಯದ ತಳವರ್ಗ / ಬುಡಕಟ್ಟು ಜನರ ಕಷ್ಟ-ಕಾರ್ಪಣ್ಯ ಗಳಿಗೆ ಕನ್ನಡಿ . ಮನಸ್ಸು ಕರಗಿ , ನಮ್ಮನು ನಾವೇ ಅರ್ಥೈಸಿಕೊಳ್ಳಬಹುದಾದ ಪ್ರಶ್ನೆಗಳು ಮೂಡುತ್ತವೆ. ಅದಕ್ಕೆ ಏನೋ  ಈ ಸಿನೆಮಾಗೆ ವಿಡುದಲೈ ಅಂದರೆ ಬಿಡುಗಡೆ/ಸ್ವಾತಂತ್ರ್ಯ ಅನ್ನೋ ಹೆಸರು. 

Rating: ೮೫/೧೦೦

-ಪ್ರಮೋದ್ ಸಾಲಿಗ್ರಾಮ ರಾಮಕೃಷ್ಣ

ಪಂಜಾದ ಮ್ಯಾಲೊಂದು ಪ್ರಬಂಧ

ಸ್ನೇಹಿತರೇ ನಮಸ್ಕಾರ.’ಪಂಜಾನs' ಅಂತ ಒಮ್ಮಿಗಲೇ ಆವಾಕ್ಕಾಗಬ್ಯಾಡ್ರಿ.ಈ ಪಂಜಾ ಹುಲಿ-ಸಿಂಹದ ಪಂಜಾ ಅಲ್ರಿ .  ಮತ್ತ ನಮ್ಮ ಬೆಂಗಳೂರು -ಮೈಸೂರಿನ
ಪಂಚೆನೂ ಅಲ್ರಿ.ಯಾಕಂದ್ರ ಆ ಪಂಚೆಯ ಠೀವಿ  ಬ್ಯಾರೆನೇ ಇರತದ.ಕೆಂಪು-ಹಸಿರು ಬಣ್ಣದ ಎರಡು  ಬಟ್ಟಿನ ಜರದ ಅಂಚೇನು? ಬೆಳ್ಳಗ ಶುಭ್ರ ಕೊಕ್ಕರೆಯಂಥ ಅದರ ಮಿನುಗೇನು?......ಅದಲ್ಲ ತಗೀರಿ,ಇದು ನಮ್ಮ ಉತ್ತರ ಕನಾ೯ಟಕದ ಪಂಜಾsರೀ..

ಜೀವನದಾಗ ಒಂದು ಗುರಿ ಇರಬೇಕು ;ಕೆಲವೊಂದು ರೂಲ್ಸ್ ,ಕಂಡೀಷನ್ಸ ಇರಬೇಕು  ಅನ್ನೋದು ಬಲ್ಲವರ ಮಾತು.ನಮ್ಮ ಡಿ.ವಿ.ಜಿ.ಯವರಂತೂ”ಜೀವಗತಿಗೊಂದು ರೇಖಾಲೇಖವಿರಬೇಕು  ನಾವಿಕನಿಗೆ ಇರುವಂತೆ  ದಿಕ್ಕು  ದಿನವೆಣಿಸೆ’ ಅಂತ ಖಡಾಖಂಡಿತವಾಗೇ ಹೇಳಿಬಿಟ್ಟಾರ.ಆದ್ರ ನಮ್ಮ ಈ ಕೈಮಗ್ಗದ , ಖಾದಿಭಂಡಾರದ ಪಂಜಾಕ್ಕ ಇವು ಯಾವ ಮಾತೂ ಅಪ್ಲೈ
ಆಗಂಗಿಲ್ಲ.ಅದಕ್ಯಾವ ಘನಂದಾರಿ ಗೊತ್ತು ಗುರಿ ಏನೂ ಇಲ್ಲ.ಅದರಲೆ ತಲಿ ಅರೆ  ಒರಸಕೋರಿ, ಮಾರಿ ಅರೆ ಒರಸಕೋರಿ ,ಮುಸುರಿಗೈ ಅರೆ ಒರಸಕೋರಿ, ಅಳ್ಳಕ ಆಗಿದ್ದ ಹೂರಣ ಅರೆ ಸೋಸರಿ,ಅನ್ನದ ಗಂಜಿ ಬಸೀರಿ,ಶ್ರೀಖಂಡಕ್ಕ ಮಸರರೆ ಕಟ್ರಿ, ಮೊಳಕಿ ಬರಸಲಿಕ್ಕೆ ಕಾಳ ಅರೆ ಕಟ್ಟಿಡ್ರಿ, ದೇವರ ಒರಸೂ ವಸ್ತ್ರ ಮಾಡ್ರಿ,ಮಡೀಲೆ ಒಣಗಹಾಕಿ ದೇವರ ಪೂಜಾ ಅರೇ ಮಾಡ್ರಿ ..ಇಲ್ಲಾ  ಶ್ರಾದ್ಧ-ಪಕ್ಷ -ತಿಥಿ ಮಾಡ್ರಿ..  ಎಲ್ಲಾ ನಡೀತದ.ಫಲಾಫಲದ ಚಿಂತೆಯಿಲ್ಲದ ಕಮ೯ಯೋಗಿಯಂತೆ ಯಾವ ಕೆಲಸವನ್ನಾದರೂ ನಿಷ್ಠೆಯಿಂದ  ಮಾಡುವ ಹಿರಿಮೆ ಇದರದು.ನಾ ಮೊದಲೇ ಹೇಳಿದ್ಹಂಗ ಇದು ಯಾವ ನಿಯಮಗಳ ಮುಲಾಜಿಲ್ಲದ ಸವ೯ತಂತ್ರ ಸ್ವತಂತ್ರ ವಾದದ್ದು.ಅದಕ್ಕ ಯಾವದೇ ಪಂಜಾದ ಮ್ಯಾಲೂ ‘ವಾಶಿಂಗ್ ಇನ್ ಸ್ಟ್ರಕ್ಶನ್ಸ’ ಇರಂಗಿಲ್ಲ ನೋಡ್ರಿ.”only hand wash,only dry clean ,keep away from the fire,only machine wash in 40 degree ,do not iron ..ಇಂಥ ಯಾವ  ರಗಳೇನೂ ಇಲ್ಲ.ಕೈಲೇರೆ ಒಗೀರಿ,ಮಶೀನ್ ನಾಗರೆ ಹಾಕ್ರಿ,ಅಗಸರವನಿಗೇ ಕೊಡ್ರಿ...ಎಲ್ಲಾನೂ ನಡೀತದ.ಇದ್ರ ಒಂಚೂರು ನಿರಮಾನೋ,ನೀಲಿಪಾಲಿನೋ ಹಾಕಿದರೂ ನಡದೀತು! ಇಲ್ಲಂದ್ರ ಬರೀ ನೀರಲ್ಲಿ ಕೈಯಿಂದ ಕುಕ್ಕಿ ಹಾಕಿದರೂ ಆಯಿತು.ಬಿಚ್ಚಿ ಹರವಿದ್ರ ಐದು ನಿಮಿಷದಾಗ ಒಣಗೇ ಬಿಡತದ. ಇಸ್ತ್ರಿ ಪಸ್ತ್ರಿ ಮಾಡೂ ತಂಟೆನೂ  ಇಲ್ಲ.
ಇನ್ನು ಇವುಗಳ ಸೈಜೋ? ದಶಾವತಾರದ ವಾಮನನಿಂದ ಹಿಡಿದು ತ್ರಿವಿಕ್ರಮನವರೆಗೆ..ಅಂಗೈ ಅಗಲದಿಂದ ಹಿಡಿದು ನವ್ವಾರಿ ಸೀರಿಯಷ್ಟು ದೊಡ್ಡದೂ ಸಿಗತಾವ.ಕನಾ೯ಟಕ ಬಿಟ್ಟು ಸುಮಾರು ೨೫ ವಷ೯ಗಳಿಂದ ದೆಹಲಿ – ಲಂಡನ್ ಅಂತ ಎಲ್ಲೇ ಅಡ್ಡಾಡಿದರೂ ನಮ್ಮ ಮನೆಯ  ಕಪಾಟಿನಾಗ ಪಂಜಾಕ್ಕೊಂದು ಜಾಗ ರಿಸವ್೯ ಇರೂದಂತೂ ಗ್ಯಾರಂಟಿ .ನಾನು ಪ್ರತಿಸಲ ಸೂಟಿಗೆ  ಅಂತ ನನ್ನ ತವರು  ಮನಿಗೆ ಹೋದ್ರ  ಏನು ಬಿಟ್ಟರೂ ,ಬ್ಯಾರೆ ಬ್ಯಾರೆ ಸೈಜಿನ  ನಾಲ್ಕು ಪಂಜಾ ತರೂದಂತೂ ತಪ್ಪಸಂಗಿಲ್ರಿ.ಎರಕೊಂಡ ಮ್ಯಾಲೆ ಪಂಜಾದಲೆ ತಲಿ ಒರಸಿಕೊಳ್ಳುದರ ಮಜಾನೇ ಬ್ಯಾರೆ.soft ಆದ  cotton ಬಟ್ಟಿ...ಸಂಪೂಣ೯ವಾಗಿ ನೀರು ಹೀರಿಕೊಳ್ಳುವ  ಅದರ ವೈಶಿಷ್ಟ್ಯ.. ಈ  ಟರ್ಕಿ - ಪರ್ಕಿ ಒಳಗ ಆ ಮಜಾ ಇಲ್ಲ ಬಿಡ್ರಿ.
 ನಾವು ಸಣ್ಣವರಿದ್ದಾಗ ನಮ್ಮ ಸೋದರಮಾವ  ಚ್ಯಾಷ್ಟಿ ಮಾಡತಿದ್ರು...”ನೈನಂ ಛಿಂದಂತಿ ಶಸ್ತ್ರಾಣಿ  ನೈನಂ ದಹತಿ ಪಾವಕ: “ ಅಂತ ಶ್ರೀಕೃಷ್ಣಗ ಭಗವದ್ಗೀತಾ ಒಳಗ ಆತ್ಮದ ಲಕ್ಷಣ ಹೇಳೂ ಐಡಿಯಾ ನಮ್ಮ ಸುಬ್ಬಣ್ಣಾಚಾರ್ಯರ ಪಂಜಾ ನೋಡಿನೇ ಬಂದಿರಬೇಕು ಅಂತ.ಹಂಗs  ಅವಾಗಿನ ಅಂದ್ರ 60- 70 ರ ದಶಕದ ಸುಬ್ಬಣಾಚಾಯ೯ರಿಂದ ಈಗ  2022-23 ರ ನಮ್ಮ ಪವಮಾನಚಾರ್ಯರತನಕ ಇದರ ಜಾಗ ಏನೂ ಬದಲಾಗಿಲ್ಲ. ನಮ್ಮ ಪವಮಾನಾಚಾರ್ಯರು  face-book,WhatsApp  ಎಲ್ಲಾದರಾಗೂ ಇದ್ದಾರ.ಕಂಪ್ಯೂಟರ್ ನಾಗ ಕುಂಡಲಿ  ತಗೀತಾರ.ವಿಮಾನದಾಗ ಓಡಾಡತಾರ.ಆದ್ರ ಪಂಜಾದ ಜಾಗಾದಾಗ ಮಾತ್ರ ಇನ್ನೊಂದು  ಸಾಮಾನು ಬಂದಿಲ್ಲ ನೋಡ್ರಿ.ಇವುಗಳದು ತಲೆ-ತಲಾಂತರದಿಂದ ಒಂಥರಾ ‘ಏಕಮೇವ ಚಕ್ರಾಧಿಪತ್ಯ’.  ‘ಸೂಯ೯ನ ಕಾಂತಿಗೆ ಸೂಯ೯ನೇ ಸಾಟಿ  .ಹೋಲಿಸಲಾರಿಲ್ಲ.’ ಅಂದ್ಹಂಗ ಪಂಜಾದ ಹಿರಿಮೆಗೆ ಪಂಜಾನೇ ಸಾಟಿ .ಹೋಲಿಸಲಾರಿಲ್ಲ.’ಮಡಿವಾಳರ ಶತ್ರು ,ಮಠದಯ್ಯಗಳ ಮಿತ್ರ....ಲಂಗೋಟಿ ಬಲು ಒಳ್ಳೇದಣ್ಣ  - ಒಬ್ರ ಹಂಗಿಲ್ಲದೇ ಮಡಿಗೆ ಒದಗುವುದಣ್ಣ ‘ ಅಂತ ಪುರಂದರದಾಸರು ಹಾಡಿದರಲ್ಲ.....ನಾವು ಬೇಕಾದರ ಲಂಗೋಟಿಗೆ ಪಯಾ೯ಯವಾಗಿ ಪಂಜಾ ಬಳಸಿಕೊಂಡ್ರ ಏನೂ ತಪ್ಪಿಲ್ಲವೇನೋ?! ಈ ಪಂಜಾಗಳಿಗೆ ರೇಶ್ಮೆಯಂಥಾ ರೇಶ್ಮೆಯಿಂದನೂ ಕಾಂಪಿಟೇಶನ್ ಇಲ್ಲ ಬಿಡ್ರಿ.

ಬ್ರಾಹ್ಮಣರ  ಮನ್ಯಾಗ ಏನು ಇಲ್ಲಂದ್ರೂ ನಡೀತದ.ಆದ್ರ ಈ ಪಂಜಾ ಇಲ್ಲಂದ್ರ ನಡ್ಯಂಗಿಲ್ಲ ನೋಡ್ರಿ.ದೇವರ  ಪೂಜಾದ ಸಮಯಕ್ಕ ಉಪಯೋಗಿಸಿದಂಥ ಪಂಜಾನ್ನ ಆಮ್ಯಾಲೆ ಬಿಚ್ಚಿ ನೋಡಬೇಕ್ರಿ..ಅದರ ಮ್ಯಾಲೆ ಒಂದು  ಸುಂದರ ವಣ೯ಚಿತ್ರ , ಒಂದು  modern art ಆಗಿಬಿಟ್ಟಿರತದ.ಅಕ್ಷಂತಿ,ಗಂಧ,ಅರಿಶಿನ,ಕುಂಕುಮ ಎಲ್ಲದರ ಸುಂದರ ಚಿತ್ತಾರ...ಇನ್ನ ದೊಡ್ಡ  ದೊಡ್ಡ  ಸಮಾರಾಧನಿ ಅಡಿಗಿಗೆ ಪಂಜಾ ಬೇಕೇ ಬೇಕ್ರಿ.ದೊಡ್ಡ  ದೊಡ್ಡ ಪಾತೇಲಿ ಒಲಿ ಮ್ಯಾಲಿಂದ ಇಳಸಲಿಕ್ಕೆ ಒದ್ದಿ ಪಂಜಾನೇ ಬೇಕ್ರಿ.ಹಾಂ,ಮಸಾಲಿಪುಡಿ,ಖಾರಪುಡಿ ,ಅರಿಶಿನ ಪುಡಿ ಎಲ್ಲಾ ಮೆತ್ತಿದ ಅದರ ಸೌಂದರ್ಯನೇ ಬ್ಯಾರೆ. ಇಷ್ಟ ಯಾಕ್ರಿ ಸ್ವಾಮಿಗೋಳು ಮುದ್ರಾ ಹಾಕಬೇಕಂದ್ರೂ ಈ ಪಂಜಾ ಜೋಡಿಗೆ ಬರಬೇಕ್ರಿ.ಒದ್ದಿ ಪಂಜಾದ ಮ್ಯಾಲೆ ಮುದ್ರಿ ಒತ್ತಿದ ಮ್ಯಾಲೆನೇ ಅದು ನಮ್ಮ ಮೈ ಮ್ಯಾಲೆ ಮೂಡೂದರಿ.
ನಮ್ಮ ಗದಗಿನ ಕುಮಾರ ವ್ಯಾಸನ ಭಾರತಕ್ಕೂ ಇದು ತನ್ನ ಕೊಡುಗೆ ಸಲ್ಲಿಸಿದ್ದ ಗೊತ್ತಿರಬೇಕ ನಿಮಗ. ಬಾವಿ ನೀರಿನ ಸ್ನಾನಮಾಡಿ ಉಟಗೊಂಡಿದ್ದ ಒದ್ದಿ ಪಂಜಾ ಆರೂತನಾ ಕುಮಾರವ್ಯಾಸಗ ಕಾವ್ಯ ಸ್ಫೂರ್ತಿ ಇರತಿತ್ತು ಅಂತಲೂ, ಕಂಬಕ್ಕೆ ಆರಲೆಂದು ಕಟ್ಟಿದ ಪಂಜಾದ ಮ್ಯಾಲ ನಾರಾಣಪ್ಪಗ ಮಹಾಭಾರತ ಸಚಿತ್ರವಾಗಿ ಕಾಣಿಸುತ್ತಿತ್ತು ಅಂತಲೂ ದಂತಕಥೆಗಳು ಪ್ರಚಲಿತದಾಗ ಅವ. 
ಹಂಗಂತ ಇದರ ಜಾಗಾ ಬರೇ ಬಡ ಬ್ರಾಹ್ಮಣರ ಮನ್ಯಾಗ ಮತ್ತ ಮಠದಾಗಷ್ಟೇ ಅಂತ ತಿಳಕೋಬ್ಯಾಡ್ರಪಾ.ಇದು ರಗಡ ಸಲ ಬಾಲಿವುಡ್ ಸವಾರಿನೂ ಮಾಡಿ  ಬಂದದ.ನಮ್ಮ ರಾಜಕಪೂರ್ ಫ್ಯಾಮಿಲಿಯವರಿಗಂತೂ ಇದು ಫೇವರಿಟ್. ‘ ತುಝೆ ಬುಲಾಯೆ ಯೆ ಮೇರಿ ಬಾಹೇಂ...ಗಂಗಾ  ಯೆ ತೇರಿ ಹೈ ಫಿರ್ ಕೈಸಿ ದೇರಿ ಹೈ’ಅಂತಲೂ, ‘ಸತ್ಯಂ ಶಿವಂ ಸುಂದರಂ ‘ ಅಂತಲೂ ಹಾಡಿ ತಾನೂ ಕುಣಿಯೂದಲ್ಲದ ಎಲ್ಲಾರ ಮೈ-ಮನಸ್ಸನ್ನೂ ಕುಣಿಸಿ -ತಣಿಸೇದ ಅನ್ನೂದನ್ನ ಮರೀಬ್ಯಾಡ್ರಿ.
ಇಷ್ಟೆಲ್ಲಾ  ಆದ್ರೂ ಸೊಕ್ಕಿಲ್ಲ ನೋಡ್ರಿ ಅದಕ್ಕ.”ತುಂಬಿದ ಕೊಡ ತುಳಕಂಗಿಲ್ಲ “ಅನ್ನೂಹಂಗ ಸದ್ದಿರದೇ ತನ್ನ ಕತ೯ವ್ಯದಲ್ಲಿ ನಿರತವಾಗಿರತದ.ಫಲಾಫಲಾಪೇಕ್ಷೆಯಿಲ್ಲದೇ ,ಮೇಲು -ಕೀಳು ಎನ್ನದೇ ಕಮ೯ಯೋಗಿಯಂತೆ ತಾನಾಯಿತು ತನ್ನ ಕಾಯಕವಾಯಿತು ಎಂಬಂತಿರತದ.

ಮತ್ತ ಇಂಥ ಪಂಜಾಕ್ಕ  ಒಂದು ಮೆಚ್ಚುಗಿ ಮಾತ ಬರಲೆಲಾ ನಿಮ್ಮ ಕಡೆಯಿಂದ.

- ಗೌರಿ ಪ್ರಸನ್ನ