ಮಾಯಾಲೋಕಗಳು

ಅಜ್ಜಿ ಕಥೆ

ನನ್ನ ಮೊಮ್ಮಕ್ಕಳು ರಜಾ ಬಂದಾಗ ನಮ್ಮ ಮನೆಗೆ ಬರುತ್ತಾರೆ. ಬಂದಾಗ ಅಜ್ಜಿ ಕತೆ ಹೇಳು ಅಂತ ಕೇಳುತ್ತಾರೆ. ಆಯಿತು. ಕೇಳಿ. ಇದು ನಡೆದ ಸಮಾಚಾರ. ಸುಮಾರು 100 ವರ್ಷ ಕಿಂತ ಮುಂಚೆ ನಡೆದ ಕಥೆ. ನನಗೆ ನನ್ನ ಅಮ್ಮ ಹೇಳಿದ್ದು. ಏನಪ್ಪಾ ಅಂದರೆ ನಾವು ಮೂಲತ: ಮಹಾರಾಷ್ಟ್ರದವರು. ಮಾದ್ವ ಬ್ರಾಹ್ಮಣರು. ವಿಪರೀತ ಮಡಿ, ಮೈಲಿಗೆ ಗಲಾಟೆ. ಮನೆಯ ಹೆಂಗಸರು ತುಂಬಾ ಜೋರು. ಆ ಕಾಲದಲ್ಲಿ ಕಚ್ಚೆ ಹಾಕಿಕೊಂಡು ಕುದರೆ ಸವಾರಿ ಮಾಡುತ್ತಿದ್ದರಂತೆ  ಅವರು ಪೂನಾ ಹತ್ತಿರ ಒಂದು ಊರಲ್ಲಿ ಇದ್ದರಂತೆ. ಪೇಶ್ವೆಗಳ ಹತ್ತಿರ ಸಿಪಾಯಿ ಗಳಾಗಿ ಇದ್ದರಂತೆ. ಇವರಿಗೆ ಮೈಸೂರಿನಲ್ಲಿ ನೆಂಟರು ಮದುವೆಗೆ ಬರಬೇಕೆಂದು ಕರೆದರಂತೆ. ಆ ಕಾಲದಲ್ಲಿ ಸಂಚಾರ ಮಾಡುವುದು ಬಹಳ ಕಷ್ಟ. ಕುದರೆಮೇಲೆ ಕಾಡಿನ ದಾರಿಯಲ್ಲಿ ಹೋಗಬೇಕು. ಚಿಕ್ಕ ಚಿಕ್ಕ ಹಳ್ಳಿಗಳಲ್ಲಿ ರಾತ್ರಿ ಇರಬೇಕು. ಸಾಮಾನ್ಯವಾಗಿ ಮರಾಟಿಗ ಹೆಂಗಸರು ಗಟ್ಟಿಗರು, ಸರಿ ಅಂತ ಪ್ರಯಾಣಕ್ಕೆ ಎಲ್ಲ ಸಿದ್ದಮಾಡಿಕೊಂಡು ಗಂಡ ಮತ್ತು ಹೆಂಡತಿ ಎರಡು ಕುದರೆ ಮೇಲೆ ಹೊರಟರಂತೆ. ಸುಮಾರು ದಿನಗಳು ಕಳೆದವು. ಎಷ್ಟೂ ಕಾಡು, ಮೆಡು ಗಲ್ಲಿ ಸುತ್ತಿ, ನಾನಾ ತರಹದ, ಕಷ್ಟ ಅನುಭವಿಸಿದರು. ಹುಲಿ, ಸಿಂಹ, ಹಾವು, ಜಿಂಕೆ ನಾನಾ ತರಹದ ಪ್ರಾಣಿಗಳನ್ನು ನೋಡಿದರಂತೆ. ಅವರ ಹತ್ತಿರ ಬಂದೂಕು ಇತ್ತು. ಒಂದು ಸಲ ಅವರ ಹತ್ತಿರ ಇದ್ದ ತಿಂಡಿ ಸಾಮಾನು ಮುಗಿದುಹೋಯ್ಯಂತೆ. ಕಾಡಿನಲ್ಲಿ ಏನು ಮಾಡುವುದು ಅಂತ, ಜೇನು, ಹಣ್ಣು ಸಿಗುತ್ತಾ ಅಂತ ನೋಡುತ್ತಾ ಇದ್ದರಂತೆ. ಒಂದು ಬಂಡೆ ಮೇಲೆ ದೊಡ್ಡ ಮುದ್ದೆ ಕಾಣಿಸಿತು. ಹೋಗಿ ನೋಡಿದರೆ ಬೇಲದ ಹಣ್ಣು, ಜೇನುತುಪ್ಪ ಕಲಿಸಿ,ಇತ್ತಂತ್ತೆ. ಇವರು ಹಸಿವೆಯನ್ನು ತಡಯಲಾರದೆ ತಿಂದರಂತೆ. ಅಷ್ಟರಲ್ಲಿ ಒಂದು ಕರಡಿ, ತನ್ನ ಮಕ್ಕಳಲಂದಿಗೆ ಬರುತ್ತಾ ಇದ್ದಿದ್ದನ್ನು ನೋಡಿ, ಇಬ್ಬರು, ಕುದರೆಮೇಲೆ ಹತ್ತಿ ಓಡಿಹೋಗಿ ಜೀವ ಉಳಿಸಿಕೊಂಡರು.  ಕರಡಿ ಪಾಪ!ತನ್ನ ಮಕ್ಕಳಿಗೆ  ತಯಾರಿಸಿದ ಬೆಲದ ಹಣ್ಣು ಜೇನು ತುಪ್ಪದ ಫಲಾಹಾರ,ನಮ್ಮ ನೆಂಟರು ತಿಂದುಬಿಟ್ಟರು. ಕರಡಿ ಅಟ್ಟಿಸಿಕೊಂಡು, ಬರುವವಷ್ಟ್ರಲ್ಲಿ, ಇವರು ಕುದರೆಮೇಲೆ ದೌಡಾಯಿಸಿದರು.
ಹೀಗೆ ನಮ್ಮ ಅಮ್ಮ ನಮಗೆಲ್ಲ ಬೆಳದಿಂಗಳ ಊಟ ಕೈ ತುತ್ತು ಹಾಕುತ್ತ ಹೇಳುತ್ತಿದರು.

'ಅಜ್ಜಿ ಇದು ನಿಜವಾದ ಘಟನೆನಾ ಅಥವಾ ಬರಿ ಕಥೆನಾ?' ' ನನ್ನ ತಾಯಿಯ ಮುತ್ತಜ್ಜಿ,ಮುತ್ತಜ್ಜ ಪೂನಾದಿಂದ ಮೈಸೂರಿಗೆ ವಲಸೆಬಂದದ್ಫು ನಿಜ. ಕುದುರೆ ಮೇಲೆ ಕಾಡಿನಲ್ಲಿ ಬಂದಿದ್ಫು ನಿಜ. ಮಿಕ್ಕಿದೆಲ್ಲ ನನಗೆ ಗೊತ್ತಿಲ್ಲ' ಅಂತ ಜಾರಿಕೊಂಡೆ. ಇಲ್ಲದಿದ್ದರೆ Where is the proof? ಅಂದರೆ ಏನು ಮಾಡಲಿ? ನಾವೆಲ್ಲ ನಮ್ಮ ಅಮ್ಮ ಹೇಳಿದ ಕಥೆ 200% ನಂಬುತ್ತೀವಿ. ಒಂದು ಜನರೇಶನ್ ಗೆ ಮುಂದಿನ ಜನರೇಶನ್ ಕತೆ ಇನ್ನು ಜೀವಂತ ವಾಗಿದೆ.

~ ವತ್ಸಲಾ ರಾಮಮೂರ್ತಿ

ಜಾಹೀರಾತುಗಳ ಮಾಯಾಲೋಕ

ಇದೀಗ ಇಲ್ಲಿ  ಸಂಜೆಗಳೇ ಇಲ್ಲದ  ಬರೀ ಬೆಳಗು – ರಾತ್ರಿಗಳ ನವೆಂಬರ್. ಚಳಿರಾಯ ನಿಧಾನವಾಗಿ ತನ್ನ ಪಾದವೂರುವ  ಸನ್ನಾಹದಲ್ಲಿದ್ದಾನೆ.  ಚಕ್ಕುಲಿ- ಕರಚಿಕಾಯಿ, ದೇಸಿ ಘೀ ಯ ಬೇಸನ್ ಉಂಡಿಗಳ ದೀಷಾವಳಿ ಫರಾಳದ  ಪ್ರಭಾವವೋ ಅಥವಾ ಚಳಿರಾಯನ ಕರಾಮತ್ತೋ ಅಂತೂ ಸಣ್ಣನೆಯ ಕೆಮ್ಮು, ಗಂಟಲ ಕೆರೆತ,  ಮೈಕೈ ನೋವು...ಹೀಂಗ  ಒಂದೊಂದೇ ಕಿರಿಕರಿಗಳು ,ಕಾಡಲಿಕ್ಕೆ ಶುರುವಾಗೂ ದಿನಗಳಿವು. 

‘ ಗಲೇಂ ಮೆ ಖರಾಶ್ ಮಜೇದಾರ್ ಸ್ಟೆಪ್ಸಿಲ್ಸ’ , ‘ ವಿಕ್ಸ್ ಕೀ ಗೋಲಿ ಲೋ ಖಿಚ್ ಖಿಚ್ ದೂರ್ ಕರೋಂ ‘
ಇದೇನಿದು ಜಾಹೀರಾತು ಶುರು ಮಾಡಿದ್ರೆಲಾ ಅಂತೀರೇನು? ಹೌದ ನೋಡ್ರಿ ಈ ಜಾಹೀರಾತುಗಳ ಮಹಿಮಾ ಮತ್ತ ಮಾಯಾ ( ಮುನ್ನಾಭಾಯಿಗತೆ ಯೆ ಮಹಿಮಾ ಔರ್ ಮಾಯಾ ಕೌನ್ ಹೈ ಅಂತ ಮಾತ್ರ ಕೇಳಬ್ಯಾಡ್ರಿ ಮತ್ತ) ಭಾಳ ದೊಡ್ಡದು ಬಿಡ್ರಿ. ಖರೇ ಹೇಳಬೇಕಂದ್ರ ಈ ಇಂಟರ್ ನೆಟ್ , ಗೂಗಲ್ ಮಹಾಶಯ ಸಹಾಯಕ್ಕಿಲ್ಲ ದ ನಮ್ಮ ಆಗಿನ ದಿನಗಳಲ್ಲಿ ನಮಗೇನರೇ ಅಲ್ಪ-ಸ್ವಲ್ಪ ಲೋಕಜ್ಞಾನ, ಸಾಮಾನ್ಯ ಜ್ಞಾನ ಇತ್ತು ಅಂದ್ರ ಅದರಾಗ ಈ ಜಾಹೀರಾತುಗಳದೇ ದೊಡ್ಡ ಪಾತ್ರ ಅಂತ ನಿಸ್ಸಂಶ ಯವಾಗಿ ಹೇಳಬಲ್ಲೆ.
ಡಮಡಮು ಅಂತ ಬಾರಸಕೋತ ಮಂಗ್ಯಾ ಆಡಸಂವಾ ಬಂದ್ರ, ‘ಮನ ಡೋಲೆ ಮೋರಾ ತನ್ ಡೋಲೆ’ ಅಂತ ಪುಂಗಿ ಊದೋ ಹಾವಾಡಿಗನ ಆ ಬಿದಿರನ ಬುಟ್ಟಿ ಕಂಡ್ರ, ಬಾರಕೋಲಿನ ಚಾಟಿ ಮೈಮೇಲೆ ಬೀಸಕೋತ ‘ ನೀರ ಹಾಕ್ರಿ, ನೀರ ಹಾಕ್ರಿ’ ಅಂತ ದುರಗಮುರಗ್ಯಾ ಬಂದ್ರ , ಆನೆಯೋ- ಒಂಟೆಯೋ ಸವಾರಿಗಾಗಿ ಬಂದ್ರ, ಯಾರೋ ಕೌಲೆತ್ತು ತಂದ್ರ, ಆಕಾಶದಾಗೊಂದು ವಿಮಾನ ಹಾರಿದ್ರ ಮನೆಯೊಳಗಿಂದ ಹೊರಗೆ ಓಡೋಡಿ ಬಂದು ಜಗತ್ತಿನ ಅದ್ಭುತಗಳೆಲ್ಲ ಅಲ್ಲೇ ಮೇಳೈಸಿಬಿಟ್ಟಾವೇನೋ ಅನ್ನೂಹಂಗ ಬೆರಗುಗಣ್ಣಿಂದ ನೋಡುತ್ತ ಅವನ್ನೆಲ್ಲ ಆಸ್ವಾದಿಸುವ ಮುಗ್ಧ ಬಾಲ್ಯ – ಹದಿಹರೆಯಗಳವು. ಹೊಸತಾಗಿ ಆಗಷ್ಟೇ ಅವರಿವರ ಮನೆಯಲ್ಲಿ ಸಣ್ಣದಾಗಿ ಒಂದೊಂದೇ Black & white, portable T.V.ಗಳು ಬರಲು ಶುರುವಾಗಿದ್ದ ದಿನಗಳು. ಖರೇ ಹೇಳಬೇಕಂದ್ರ ಆಗ ಈ ಟಿ ವಿ ವೈಯಕ್ತಿಕ ಸ್ವತ್ತಾಗಿರಲಿಲ್ಲ. ಮನೆಯವರು ದುಡ್ಡನ್ನು ಪಾವತಿಸಿ T.V ತಂದರೂ ಅದರ ಮೇಲೆ ಇಡಿಯ ಓಣಿಯ ಜನರ ಅಧಿಕಾರವಿರುತ್ತಿತ್ತು. ಈಗಿನವರಿಗೆ ಇದು ನಂಬಲಸಾಧ್ಯವಾದರೂ ನಮ್ಮ ಕಾಲದ ಸೋಳಾಣೆ ಸತ್ಯ,ಶಂಬರ್ ಟಕ್ಕೆ ಖರೇ ಮಾತಾಗಿತ್ತು ಇದು.

ನಮ್ಮ ಓಣ್ಯಾಗ ಮೊದಲ ಉಕ್ಕಲಿ ಮಾಮಾ ಅವರ ಮನಿಗೆ ಟಿ.ವಿ. ಬಂದಿತ್ತು. ಅವರ ಮನೆಯ ಮೂರುಜನ ನಮ್ಮ ಮನೆಯ ಆರು ಜನ ಅದನ್ನು ನೋಡಲು ಕೂಡುವುದಿತ್ತು. ಆ ಟಿ.ವಿ. ಕಾರ್ಯಕ್ರಮಗಳಿಗೆ ತಕ್ಕಹಂಗ ಅವರು ತಮ್ಮ ಊಟ, ತಿನಸು ,ಛಾ ಮುಗಸಕೊಂಡು ಎಷ್ಟೋ ಸಲ ನಮಗೂ ಕೊಟ್ಟು ನಮ್ಮನ್ನೆಲ್ಲ ಕುರ್ಚಿ, ದಿವಾನದ ಮೇಲೆ ಕೂಡಿಸಿ ಪಾಪ ಅವರೇ ಕೆಳಗೆ ಚಾಪೆ ಮ್ಯಾಲೆ ಕೂಡೋ ಪಾಳಿ ಬರತಿತ್ತು. ಆದ್ರ ಮಜಾ ಅಂದ್ರ ಇವುಗಳ ಬಗ್ಗೆ ಅವರಿಗೂ ಬೇಸರವಿರಲಿಲ್ಲ. ಉಲ್ಟಾ ಎಂದರೇs ಒಮ್ಮೆ ನಾವು ಹೋಗದಿದ್ರ ಅವರ ಮಗಳು ರೇಖಾ ಕಟ್ಟಿ ಮ್ಯಾಲೆ ನಿಂತು ‘ ಚಿತ್ರಹಾರ್ ಶುರು ಆತು ಲಗೂನೇ ಬರ್ರಿ’ ಅಂತ ಕೂಗಿ ಕರೆಯುತ್ತಿದ್ದಳು. ರಾತ್ರಿ ಹೊತ್ತು ಪ್ರಸಾರವಾಗುತ್ತಿದ್ದ ‘ ಕಿಲ್ಲೆ ಕಾ ರಹಸ್ಯ’ ನೋಡಲು ಅವರು ನಿದ್ದೆ ಬಂದಿದ್ದರೂ ತೂಕಡಿಸುತ್ತ ನಮಗಾಗಿ ಕಾಯುತ್ತಿದ್ದದು ನನಗೀಗಲೂ ನೆನಪಿದೆ.

84 ರಲ್ಲಿ ನಮ್ಭ ಪ್ರಧಾನಿ ಇಂದಿರಾಗಾಂಧಿಯವರ ಹತ್ಯೆಯಾದಾಗಲಂತೂ ನಮ್ಮ ಹಿಂದಿನ ಓಣಿಯ ಗುನ್ನಾಳಕರ ಅವರು ತಮ್ಮ ಟಿ.ವಿ.ಯನ್ನು ಮನೆ ಯ ಅಂಗಳದಲ್ಲಿಟ್ಟು ನೂರಾರು ಮಂದಿಗೆ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದರು. ಕ್ರಿಕೆಟ್ ಮ್ಯಾಚ್ ಗಳು ಇದ್ದರೂ ಅಷ್ಟೇ. ಪಡಸಾಲೆಯ ಟಿ.ವಿ. ಅಂಗಳಕ್ಕೇ ಬರುತ್ತಿತ್ತು.

ನಂತರ ಗೌಡರ್ ಅವರ ಮನಿಗೆ ಕಲರ್ ಟಿ.ವಿ. ಬಂದು ನಾವು ಐದು ಜನ ಮಕ್ಕಳು, ಅವರ ಮನೆಯ ಆರು ಜನ ಮಕ್ಕಳು ತಮ್ಮ ತಮ್ಮ ಸ್ನೇಹಿತರಾದಿಯಾಗಿ ಬಂಧುಬಳಗ ಸಮೇತವಾಗಿ ಸತ್ಯನಾರಾಯಣ ಪೂಜೆಯಷ್ಟೇ ಶ್ರದ್ಧೆಯಿಂದ ರಮಾನಂದ ಸಾಗರರ ರಾಮಾಯಣ, ಬಿ.ಆರ್. ಛೋಪ್ರಾರ ಮಹಾಭಾರತ ನೋಡುತ್ತಿದ್ದೆವೆನ್ನುವುದು ಬಹಳ ಸುಂದರ ನೆನಪು. ಗೌಡರ್ ಮಾಲಾಕಾಕು ಅಂತೂ ಸ್ನಾನ ಮಾಡಿ ಒಗೆದ ಬಟ್ಟೆ ತೊಡದೇ ಹೋದ್ರ ರಾಮಾಯಣ – ಮಹಾಭಾರತ ನೋಡಲಿಕ್ಕೆ ಎಂಟ್ರಿ ಪಾಸ್ ನೇ ಕೊಡತಿದ್ದಿಲ್ಲ. ಹಿಂಗಾಗಿ ನಾವು ರಾಮ- ಸೀತಾನ ಬಗ್ಗೆ ಭಯಭಕ್ತಿ ಇರದಿದ್ರ ಅಷ್ಟೇ ಹೋತು ಮಾಲಾಕಾಕುಗ ಅಂಜಿ ರವಿವಾರ ಇದ್ರೂ ಲಗೂಲಗೂ ಸ್ನಾನ – ಹೆರಳು,ಎಲ್ಲಾ ಮುಗಿಸಿಕೊಂಡು ಲಕಾಲಕಾ ತಯಾರಾಗಿ ಬಿಡತಿದ್ವಿ ಅನ್ರಿ.

ಈಗ ಮನ್ಯಾಗ 65, 75 ಇಂಚಿನ ಟಿ.ವಿ., ಹೋಮ್ ಥೇಟರ್ ಅಂತ ಸುಟ್ಟುಸುಡುಗಾಡು ನೂರಾ ಎಂಟು ಇದ್ರೂ ಆಗಿನ ಮಜಾ ಇಲ್ಲ ಅನ್ನೂದು ನನ್ನೊಬ್ಬಳ ಅನಿಸಿಕೆನೋ ಅಥವಾ ನಿಮ್ಮದೂ ಹೌದೋ ನನಗೆ ‘ ಗೊತ್ತಿಲ್ಲ.

ಹೀಂಗ ಈ ಟಿ.ವಿ. ಬಂದಮ್ಯಾಲೆ ಜಾಹೀರಾತುಗಳ ಒಂದು ಸುಂದರ ಪ್ರಪಂಚ ನಮ್ಮ ಕಣ್ಣೆದುರು ತೆರೆದುಕೊಂಡುಬಿಟ್ಟಿತು. 5-10 ಪೈಸೆಯ ಪೆಪ್ಪರ್ ಮಿಂಟೋ, ಕಿಸ್ ಮಿ ಚಾಕಲೇಟುಗಳಿಗಷ್ಟೇ ಪರಿಚಿತರಾಗಿದ್ದ ನಮಗೆ ‘ ಕಿತನಾ ಮಜಾ ಆಯೇರೆ ದುನಿಯಾ ಡೇರಿ ಮಿಲ್ಕ್ ಕಿ ಬನ್ ಜಾಯೇರೆ’ ಅಂತ ಚಾಕಲೇಟಿನಂಥ ಹೊಸ ಜಗತ್ತನ್ನು ತೋರಿಸಿದ್ದೇ ಈ ಜಾಹೀರಾತುಗಳು. ‘ಕುಛ್ ಬಾತ್ ಹೈಂ ಹಮ್ ಸಭೀಮೆಂ..ಖಾಸ್ ಹೈಂ..ಕುಛ್ ಸ್ವಾದ್ ಹೈಂ..ಕ್ಯಾ ಸ್ವಾದ್ ಹೈಂ ಜಿಂದಗಿ ಮೆಂ’ ಅಂತ ಶುರುವಾಗೋ ಡೇರಿ ಮಿಲ್ಕ್ ನ ಜಾಹೀರಾತು ನಮ್ಮ ಬದುಕಿನಾಗೂ ಸ್ವಾದ ತುಂಬಿ ಖಾಸ್ ಆದ್ವು ಇದರ ಎಲ್ಲಾ ಜಾಹೀರಾತುಗಳೂ ಒಂದೊಂದೂ ಸುಂದರ..ಒಂದೊಂದೂ ಹೃದಯಸ್ಪರ್ಶಿ. ಅವುಗಳನ್ನು ತಯಾರಿಸಿದವರ ಸೃಜನಶೀಲತೆಗೆ ನನ್ನ ಶರಣು.

‘ ಆಡು ಮುಟ್ಟದ ಸೊಪ್ಪಿಲ್ಲ’ ಅನ್ನೂಹಂಗ ಈ ಜಾಹೀರಾತುಗಳು ಕೈಯಾಡಿಸದ ಕ್ಷೇತ್ರಗಳೇ ಇಲ್ ಅನ್ನಬಹುದು. ಆಗಷ್ಟೇ ಹುಟ್ಟಿದ ಮಗುವಿನ ಪಿಂಕೂ ಗ್ರೈಪ್ ವಾಟರ್ ನಿಂದ ಹಿಡಿದು ನಿಮ್ಮ ಮಕ್ಕಳ ಎತ್ತರ, ತೂಕಗಳಿಗಾಗಿ ಕೋಂಪ್ಲಾನ್ – ಹಾರ್ಲಿಕ್ಸ್ ಗಳವರೆಗೆ, ಸ್ವಾದ್ ಭರೆ ಶಕ್ತಿಭರೆ ಪಾರ್ಲೆ ಜಿ ಯ ಜೊತೆಗೆ ನಾವು ಯಾವ ಚಹಾ ಕುಡಿಯಬೇಕು, ಯಾವ ಹಪ್ಪಳ ತಿನ್ನಬೇಕು, ನಲ್ಲನ ಮನ ಗೆಲ್ಲಲು ಅಡುಗೆಗೆ ಯಾವ ಮಸಾಲೆ ಉಪಯೋಗಿಸಬೇಕು, ಬಿರಿಯಾನಿ ರುಚಿಯಾಗಲು ಯಾವ ಅಕ್ಕಿ ಹಾಕಬೇಕು ? ಬೆನ್ನು – ಸೊಂಟ- ಹಲ್ಲು ನೋವುಗಳಿಗೆ ಏನು ಮಾಡಬೇಕು? ಯಾವ ಸೋಪ್, ಕ್ರೀಂ, ಪೌಡರ್ ನಿಂದ ನಾವು ಚಿರ ಯೌವನಿಗರಾಗಬಹುದು? ಯಾವ ಶಾಂಪೂ, ಹೇರ್ ಆಯಿಲ್ ಗಳಿಂದ ನಾವು ನಾಗವೇಣಿಯರಾಗಬಹುದು? ಯಾವ ಶೇವಿಂಗ್ ಕ್ರೀಂ, ಡಿಯೊಡ್ರಂಟ್ ಗಳನ್ನು ಬಳಸಿದ್ರ ಹುಡುಗಿಯರು ಮೈಮೇಲೆ ಬಂದು ಬೀಳಬಹುದು? ಏನು ಮಾಡಿದರೆ ಮನೆಯ ಪೀಠೋಪಕರಣಗಳನ್ನು ಆಜೀವಪರ್ಯಂತ ಮುರಿಯದಂತೆ ಇಟ್ಟುಕೊಳ್ಳಬಹುದು? ಯಾವ ಗಾಡಿ, ಬೈಕು ತಗೊಂಡ್ರ ಎಷ್ಟೆಷ್ಟು ಮೈಲೇಜು, ಏನೇನು ಲಾಭ? ಯಾವ ಚಪ್ಪಲಿ, ಶೂಸ್ ಬಳಸಬೇಕು? ಯಾವ ಒಳ ಉಡುಪುಗಳನ್ನು ಧರಿಸಬೇಕು? ಯಾವ ಪೆನ್ನು- ಪೆನ್ಸಿಲ್ – ನೋಟ್ ಬುಕ್ ಗಳನ್ನು ಉಪಯೋಗಿಸಿದ್ರ ಛಂದನೆಯ – ದುಂಡನೆಯ ಅಕ್ಷರ ಬರೆದು ವಿದ್ಯಾವಂತರಾಗಬಹುದು? ಕೊಳೆಯಾದ ಬಟ್ಟೆಗಳನ್ನು ಹೆಂಗ ಕೊಕ್ಕರೆಯಂತೆ ಬಿಳಿ ಶುಭ್ರ ಮಾಡಬಹುದು .ಇತ್ಯಾದಿ ಅಮೂಲ್ಯ – ಅತ್ಯಮೂಲ್ಯ ವಿಚಾರಗಳನ್ನೆಲ್ಲ ನಮ್ಮ ತಿಳಿವಿಗೆ ತುರುಕಿದ್ದೇ ಈ ಜಾಹೀರಾತುಗಳಂದ್ಲ ತಪ್ಪಿಲ್ಲ.
ಇನ್ನು ಕೆಲವೊಂದು ಜಾಹೀರಾತುಗಳಂತೂ ನಮ್ಮ ನೆಚ್ಚಿನ ನಟ- ನಟಿಯರ ಸಲುವಾಗಿ ಫೇವರಿಟ್. ‘ಲಿಮ್ಕಾ..ಲಿಮ್ಕಾ’ ಎಂದು ಹಾಡುವ , ಲಖಾನಿ ಹವಾಯಿ ಚಪ್ಪಲ್ ಹಾಕಿಕೊಂಡು ಕುಣಿಯುವ ಸಲ್ಮಾನ್ ಖಾನ್ ಇರಲಿ, ‘ ಡಾಬರ್ ಆಮ್ಲಾ ಕೇಶ್ ತೈಲ್’ ಅಂತ ಕಪ್ಪನೆಯ ಕೇಶರಾಶಿಯನ್ನು ಹಾರಿಸುತ್ತ ತಿರುಗುವ ಜಯಪ್ರದಾ ಇರಲಿ, ಬಾರಾತಿಯೋಂ ಕಾ ಸ್ವಾಗತವನ್ನು ಪಾನ್ ಪರಾಗ್ ಪಾನ್ ಮಸಾಲಾದಿಂದ ಮಾಡುವ ಶಮ್ಮಿಕಪೂರ್, ಅಶೋಕ ಕುಮಾರ್ ಇರಲಿ, ‘ what an Idea sir ji’ ಎನ್ನುವ ಅಭಿಷೇಕ್ ಬಚ್ಚನ್ ಇರಲಿ, Dr.fixit ನ ಅಮಿತಾಭ್ ಬಚ್ಚನ್ ಇರಲಿ, ತೀರ ಇತ್ತೀಚಿನ cleethorpes max fresh ನ ರಣವೀರ ಸಿಂಗ್ ಇರಲಿ, ಮಧುಬಾಲಾನಿಂದ ಹಿಡಿದು ಮಾಧುರಿ ದೀಕ್ಷಿತವರೆಗಿನ Lux ಸೋಪಿನ ರೂಪದರ್ಶಿಯರಿರಲಿ ಎಲ್ಲರೂ..ಎಲ್ಲವೂ ನಮ್ಮ ಫೇವರಿಟ್. ಯಾಕಂದ್ರ ನಮಗ ಬಾಲಿವುಡ್ ತಾರಾಮಣಿಗಳಂದ್ರ ಅದೇನೋ ಹುಚ್ಚು ಸೆಳೆತ – ಪ್ರೀತಿ – ಅಪನಾಪನ್. ಇನ್ನ ಅವರು ಮಾಡಿದ ads ಅಂದ್ರ ಮುಗದೇ ಹೋತ. ಅಲ್ಲೇನ್ರಿ?

ಅಲ್ರೀ ಎಲ್ಲಾಬಿಟ್ಟು ಯಕ:ಶ್ಚಿತ್ ಉಪ್ಪಿನ ಬಗ್ಗೆನೂ ಎಷ್ಟೆಲ್ಲ ಜಾಹೀರಾತುಗಳ್ರಿ..ಅದ್ಯಾಕ ಯಕ:ಶ್ಚಿತ್ ಬಿಡ್ರಿ ಇದರ ಮಹತ್ವ ಏನು ಕಡಿಮೆದ? ಇದರ ಸಲುವಾಗಿ ದಂಡಿ ಸತ್ಯಾಗ್ರಹನೇ ನಡದು ಇತಿಹಾಸದಾಗೂ ಅದಕ್ಕೊಂದು ಸ್ಥಾನ ಸಿಕ್ಕೇಬಿಟ್ಟದ. ಟಾಟಾ ನಮಕ್ ದೇಶ್ ಕಾ ನಮಕ್- ಅದರಾಗ ಶುದ್ಧತೆ, ಅಯೋಡಿನ್ ಗಳಂತೂ ಅವನೇ ಅವ ಜೋಡಿಗೆ ಚುಟಕಿ ಭರ್ ಇಮಾನದಾರಿನೂ ಅದರಾಗಿರತದ ಅನ್ನೂದು ad ನೋಡೇ ಗೊತ್ತಾಗಿದ್ದು. ‘ ಡರ್ ಕೆ ಆಗೇ ಜೀತ್ ಹೈ’ ಎಂಬ ಅಮೂಲ್ಯ ವಿಚಾರ ತಿಳಿದದ್ದೂ ಈ ಜಾಹೀರಾತಿನಿಂದಲೇ.

ಇನ್ನ ನಾವು ನಮ್ಮ ರೆಡ್ ಲೇಬಲ್ ಟೀ ಯಿಂದ Taj ಗೆ ಪಕ್ಷಾಂತರ ಮಾಡಿದ್ದಕ್ಕೂ ಈ ಜಾಹೀರಾತೇ ಕಾರಣ. ಉದ್ದನೆಯ ಗುಂಗುರು ಕೂದಲು ಹಾರಿಸುತ್ತ, ಬೆರಳುಗಳಿಂದ ತಬಲಾದ ಮೇಲೆ ನಾದದ ನರ್ತನ ಮಾಡುತ್ತ ಉಸ್ತಾದ್ ಝಾಕೀರ್ ಹುಸೇನ್ ‘ ವಾಹ್ ತಾಜ್ ಬೋಲಿಯೆ’ ಅಂತ ಸೇಳಿದ ಮ್ಯಾಲೆ ನಮಗೆ ಬ್ಯಾರೆ ಹಾದೀನೇ ಇದ್ದಿದ್ದಿಲ್ಲ ಬಿಡ್ರಿ.

‘ ದೋ ಮಿನಿಟ್’ ನ ಮ್ಯಾಗಿ ನನ್ನ ಮಕ್ಕಳ ಪ್ರೀತಿಯ ಭೋಜನ. ನನಗೂ ಅವಸರದ ಆಪ್ತಬಂಧು. ಪುಳಿಯೋಗರೆ, ಪಾವ್ ಭಾಜಿ ಮಸಾಲೆಗಳು , ಖರ್ರಂ ಖುರ್ರಂನ ಲಿಜ್ಜತ್ ಪಾಪಡ್ ಗಳು ನಮ್ಮ ಅಡುಗೆ ಮನೆಗೆ ಆಪ್ತವಾದದ್ದು ಜಾಹೀರಾತುಗಳ ಕಮಾಯಿನೇ.ಹಾಲು ಬೇಡವೆಂದ ಮಕ್ಕಳಿಗೆ compla, horlicks ಗಳ ಆಮಿಷವೊಡ್ಡಿ ಕುಡಿಸಿ ‘ಮೈ ಬಢ ರಹಾ ಹೂಂ ಮಮ್ಮಿ’ ಅಂತ ಅವರ ಪರವಾಗೆ ನಾನೇ ಅಂದುಕೊಂಡು ಖುಷಿಪಟ್ಟದ್ದು, ಬ್ಯಾಸಗ್ಯಾಗ ರಸನಾ, ಆಟ ಆಡಿ ಬಂದಕೂಡಲೇ glucon-D, ಥಂಡ್ಯಾಗ ಚ್ಯವನ್ ಪ್ರಾಶ್ ಹೀಂಗ ಮಕ್ಕಳ ಆರೋಗ್ಯದ ದೇಖರೇಕಿ ಬಗ್ಗೆ ಅತ್ಯಪರೂಪದ ಮಾರ್ಗದರ್ಶಿಗಳಾಗಿದ್ದವು.
ಈ ಮೈ ತೊಳೆವ ಸಾಬಾಣಿನ (soap) ಜಾಹೀರಾತುಗಳಂತೂ ನನ್ನ ಚಿತ್ತದಾಗ ಪಟ್ಟಾಗಿ ಕೂತಬಿಟ್ಟಾವ ಲಾ..ಲಲಾ..ಲ..ಲಾ ಅಂತ ಹಾಡಕೋತ ಸ್ವಚ್ಛ ಶುಭ್ರವಾದ ನದಿ- ಜಲಪಾತದಾಗ Liril soap ಹಿಡಿದು ಸ್ನಾನ ಮಾಡೋ ಆ ರೂಪದರ್ಶಿನ್ಶ ನೋಡಿದ್ರ ಬಚ್ಚಲಿನಾಗೇ ಹತ್ತು ಸಲ ನಮ್ಮ ಕೈಯಿಂದ ಜಾರಿ ಜಾರಿ ಬೀಳುತ್ತಿದ್ದ ಸೋಪ್ ನೆನೆಸಿಕೊಂಡು , ಇಂಥ,ಹರಿವ ನೀರಿನ ರಭಸದಾಗೊ,ಅದ್ಹೆಂಗಿನ್ನೂ ಜಾರದs ಅಕಿನ ಕೈಯಾಗೇ ಉಳದದ ಅನ್ಶೂದೇ ಸೋಜಿಗ ಅನಸತಿತ್ಯು ನನಗೆ. ಇನ್ನ ಹೊಸಬಟ್ಟಿ, ಬಿಳಿಬಟ್ಟಿ ಕೆಸರು ಮಾಡಿಕೊಂಡು ಬಂದ್ರ ಮಕ್ಕಳಿಗೆ ಬಯ್ಯದ s ‘ ದಾಗ್ ಅಚ್ಛಾ ಹೈ...surf excell hai na? ಅನ್ನುವ ನಗುಮೊಗದ ಅಮ್ಮಂದಿರೂ ನನಗ ಬ್ಯಾರೆ ಲೋಕದವರ ಹಂಗೇ ಕಾಣಸತಾರ. ಯಾಕಂದ್ರ ಸಣ್ಣವರಿದ್ದಾಗ ಹೊಸ ಬಟ್ಟೆ, ಬಿಳಿ ಬಟ್ಟೆ ಕಲೆ ಮಾಡಿಕೊಂಡ್ರ ಮಸ್ತ್ ಮಂಗಳಾರತಿ ಮಾಡಿಸಕೋತಿದ್ವಿ ಮನ್ಯಾಗ. ಈಗ ನಾನೂ ಮಕ್ಕಳಿಗೆ ಮಂಗಳಾರತಿ ಮಾಡದಿದ್ರೂ ‘ ಸ್ವಲ್ಪ ನೋಡಕೊಂಡು ಸಾವಕಾಶ ಮಾಡಲಿಕ್ಕೆ ಬರಂಗಿಲ್ಲ s?’ ಅಂತ ಅನ್ನಬಹುದೇ ಹೊರತು ‘ ದಾಗ್ ಅಚ್ಛಾ ಹೈ’ ಅನ್ನುವ ಸಹನಶೀಲತಾ ನನ್ನ ಹತ್ರ ಇಲ್ಲ.

ಒಟ್ಟಿನಾಗ ನನಗ ಈ ಜಾಹೀರಾತುಗಳ ತಯಾರಿಕೆ, ಹಣಹೂಡಿಕೆ, ಗಳಿಕೆ, ತಂತ್ರಜ್ಞಾನ ಇತ್ಯಾದಿಗಳ ಬಗ್ಗೆ ಅಷ್ಟೆಲ್ಲ ಜ್ಞಾನ ಇರದಿದ್ರೂ ಅವು ಕೊಡುವ ಮುದದ ಬಗ್ಗೆ ಬಹಳ ಖುಷಿ ಅನಸತದ. ಇವುಗಳ ಸತ್ಯಾಸತ್ಯತೆಗಳೇನೇ ಇರಲಿ ಸೆಕೆಂಡುಗಳ, ನಿಮಿಷಗಳ ಅತ್ಯಲ್ಪ ಅವಧಿಯಲ್ಲೇ ಅವುಗಳನ್ನು ಹೃದ್ಯವಾಗಿ ಪ್ರಸ್ತುತ ಪಡಿಸುವ ರೀತಿ ಇದೆಯಲ್ಲ ಅದು ನನ್ನನ್ನು ತಟ್ಟುತ್ತದೆ. ಕಿವಿ ಗುಳು ಗಳು ಅನ್ನುವಾಗ ಇಯರ್ ಬಡ್ ಹಾಕಿಕೊಂಡು ಗಲಗಲ ಮಾಡಿ ಪ್ರಪಂಚವನ್ನೇ ಒಂದು ಕ್ಷಣ ಮರೆತಂತೆ, ಕೈಗೆ ತಾಗದ ಬೆನ್ನಿಗೆ ತುರಿಕೆಯಿದಾಗ ಹಣಿಗೆಯೊಂದರಿಂದ ಅದನ್ನು ಕೆರೆದುಕೊಂಡಾಗ ಸಿಗುವ ಸುಖದಂತೆ, ಗಂಟಲಲ್ಲೇ ಅಡಗಿ ಕಾಡಿಸಿದ ಶೀನೊಂದು ‘ಆಕ್ಶೀ’ ಎಂದು ಪಟ್ಟನೇ ಹೊರಬಂದಾಗ ಸಿಗುವ ಸಮಾಧಾನದಂತೆ, ಒತ್ತಿ ಬರುತ್ತಿರುವ ತೂಕಡಿಕೆಗೊಂದು ಹೆಗಲು ದೊರೆತಾಗಿನ ನೆಮ್ಮದಿಯಂತೆ ಈ ಜಾಹೀರಾತುಗಳೂ ಕೂಡ ನಂಗ ಏನೋ ಒಂಥರಾ ಅನಿರ್ವಚನೀಯ ಅಂತಾರಲ್ಲ ಅಂಥ ಖುಷಿ, ಭರವಸೆ, ನೆಮ್ಮದಿ, ಉತ್ಸಾಹಗಳನ್ನು ಕೊಡತಾವ.

ಇದನ್ನೋದಿ ಒಂದೆರಡು ನಿಮ್ಮ ಫೇವರಿಟ್ ಜಾಹೀರಾತು ನಿಮಗ ನೆನಪಾದ್ರ, ಮನಸ್ಸು ಜರ್ ಅಂತ ಹಿಂಬರಿಕಿ ಜಾರಿಹೋದ್ರ ಅದನ್ನ ನಂಗೂ ಹೇಳೂದ ಮರೀಬ್ಯಾಡ್ರಿ.

~ ಗೌರಿಪ್ರಸನ್ನ

ಮಹಾಧಿಕನಿಗೆ ಬಂದ ಫೋನ್ ಕಾಲ್ 

ಈ ವಾರ ನಿಮ್ಮೆದುರಿಗೆ ನನ್ನ ಇನ್ನೊಂದು ಕಥೆ. ಕಳೆದ ಸಲ ನೀವೆಲ್ಲ ಕೊಟ್ಟ ಪ್ರತಿಕ್ರಿಯೆಗಳ ಪರಿಣಾಮ ಆಗಿರಬಹುದು ನನ್ನ ಬರಹದ ಮೇಲೆ. ಓದಿ ನಿಮ್ಮ ಅಭಿಪ್ರಾಯ ತಿಳಿಸಿ . ಸದಾ ಅಂಗೈಯಲ್ಲೇ ಇರುವ ಫೋನ್ ಹಲವು ಬಗೆಗಳಲ್ಲಿ ನಮ್ಮ ಜೀವನದ ದಿಕ್ಕನ್ನು ಬದಲಾಯಿಸಬಹುದು . ಈ ಕಥೆಯ ನಾಯಕ ಮಹಧಿಕನಿಗೆ ಏನಾಗಿರಬಹುದು ಈ ಕಥೆಯಲ್ಲಿ ?

ಗಂಭೀರ್ ಮಹಾಧಿಕ್ ಬುದ್ಧಿವಂತೇನೇನೋ ಸೈ. ಅದು ಅವನಿಗೂ ಗೊತ್ತು. ಚಿಕ್ಕಂದಿನಲ್ಲಿ ಅಧಿಕ ಪ್ರಸಂಗಿ ಎಂದು ಶಾಲೆಯಲ್ಲಿ ಕುಪ್ರಸಿದ್ಧನಾಗಿದ್ದ. ಈಗ ಇಂಗ್ಲೆಂಡಿನ ಪ್ರತಿಷ್ಠಿತ ಯುನಿವರ್ಸಿಟಿಯಲ್ಲಿ ಚಿಕ್ಕ ವಯಸ್ಸಿನಲ್ಲೇ ಪ್ರೊಫೆಸರ್ ಹುದ್ದೆಗೇರಿದ್ದ. ಇಲ್ಲಿನ ವರ್ಣಭೇದದ ಗಾಜಿನ ಛತ್ತನ್ನು ಒಡೆದ ಹೆಮ್ಮೆ ಅವನದ್ದು. ಬಿಳಿಯರ ನಾಡಿನಲ್ಲೇ, ಅವರ ಚಾಲಾಕಿತನವನ್ನು ಮೀರಿಸಿ, ವಿಭಾಗ ಪ್ರಮುಖನಾದ ತಾನು ಯಾರಿಂದಲೂ ಮೋಸ ಹೋಗೆನು ಎಂಬ ಧೃಡ ನಂಬಿಕೆ ಅವನದ್ದು. ಪಾಶ್ಚ್ಯಾತ್ಯರಂತೆ ಎಲ್ಲ ನಿಯಮಗಳಿಗೆ ಬದ್ಧನಾಗಿ ನಡೆಯುತ್ತೇನೆ, ಎಲ್ಲ ವಿಷಯಗಳನ್ನು ಕೂಲಂಕಷವಾಗಿ ವಿಶ್ಲೇಷಿಸಿ ನಿರ್ಣಯ ತೆಗೆದುಕೊಳ್ಳುವ ವೈಜ್ಞಾನಿಕ ಮನೋಭಾವ ವಿಶೇಷವಾಗಿ ತನ್ನದು ಎಂದೆಲ್ಲ ಅಂದುಕೊಳ್ಳುತ್ತಿದ್ದ. ಕೆಲಸಕ್ಕೆ ಹೋಗುವಾಗ ಅಚ್ಚುಕಟ್ಟಾಗಿ ತಲೆ ಬಾಚಿ, ಸೂಟು ತೊಟ್ಟು, ಮಿರುಗುವ ಬೂಟು ಧರಿಸಿಯೇ ಹೋಗುತ್ತಿದ್ದ. ಇಂಥವನ ನಡೆವಳಿಕೆಯಲ್ಲಿ ಅಹಂಕಾರ ಹೊರಹೊಮ್ಮುತ್ತಿದ್ದುದು ಸಹಜವೇ. ಅವನ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಅವನ ಬೆನ್ನ ಹಿಂದೆ ಮಹಾಧಿಕನನ್ನು ಮಹಾ ಡಿಕ್ ಎಂದೇ ಕರೆಯುತ್ತಿದ್ದರೆ ಆಶ್ಚರ್ಯವಿರಲಿಲ್ಲ.

ಸುಮಾ ಮಹಾಧಿಕನ ಅರ್ಧಾಂಗಿ. ಇವನ ಯಿಂಗ್ ಗೆ ಅವಳು ಯಾಂಗ್. ಮಹಾಧಿಕನ ಮೊಂಡುತನ, ಅಹಂಕಾರವನ್ನು ತಿದ್ದುವ ಪ್ರಯತ್ನಕ್ಕೆ ಯಾವಾಗಲೋ ಎಳ್ಳು ನೀರು ಬಿಟ್ಟಿದ್ದಳು. ಅವನ ಗುಣಗಳು ಮಕ್ಕಳಲ್ಲಿ ಒಸರದಿರಲೆಂಬ ದಿಶೆಯಲ್ಲಿ ತನ್ನ ಶಕ್ತಿಯನ್ನು ಕ್ರೋಢೀಕರಿಸಿದ್ದಳು. ಕಾನ್ಫರೆನ್ಸ್, ಮೀಟಿಂಗ್ ಎಂದು ಸದಾ ತಿರುಗುತ್ತಿದ್ದ ಮಹಾಧಿಕನ ಮನೆಯ ಎಲ್ಲ ವಹಿವಾಟು ನಡೆಸುತ್ತಿದ್ದುದು ಸುಮಾ. ಮಕ್ಕಳನ್ನು ಶಾಲೆಗೆ ಬಿಡುವುದು, ಅಡುಗೆ ಮಾಡುವುದು, ವಾರದ ಶಾಪಿಂಗ್, ಕೌನ್ಸಿಲ್ ಟ್ಯಾಕ್ಸ್ ಇತರೆ ಬಿಲ್ಲುಗಳನ್ನು ಕಟ್ಟುವುದು ಅವಳ ಜವಾಬ್ದಾರಿ. ಉತ್ತಮ ಶಿಕ್ಷಣ ಪಡೆದಿದ್ದ ಸುಮಾ ತನ್ನ ಇಚ್ಛೆಗೆ ಅನುಗುಣವಾಗಿ ಅರೆ ಕಾಲಿಕ ಶಾಲಾ ಶಿಕ್ಷಕಿಯಾಗಿದ್ದಳು. ಸ್ನೇಹಮಯಿಯಾದ ಆಕೆ ಎಲ್ಲರಿಗೂ ಬೇಕಾದವಳು. ಮಹಾಧಿಕನಿಗೆ ಅವಳು ಗೆಳತಿಯರೊಂದಿಗೆ ಫೋನಿನಲ್ಲಿ ಮಾತಾಡುವುದು, ಜನರನ್ನು ಹಚ್ಚಿಕೊಂಡು ಸಹಾಯ ಮಾಡುವುದು ಸರಿ ಹೋಗುತ್ತಿರಲಿಲ್ಲ. “ ಒಳ್ಳೆ ಪುಸ್ತಕ ಓದಿ ಬುದ್ಧಿ ಬೆಳೆಸೋದೋ, ಎಕ್ಸರ್ಸೈಸ್ ಮಾಡಿ ತೂಕ ಕಡಿಮೆ ಮಾಡೋದೋ ಬಿಟ್ಟು ಈ ರೀತಿ ಟೈಮ್ ವೇಸ್ಟ್ ಮಾಡ್ತಾ ಇದ್ದೀಯ. ನಿನ್ನ ದೇಹ ಮಾತ್ರ ಬೆಳೀತಾ ಇದೆ” ಎಂದು ಮೂದಲಿಸುತ್ತಿದ್ದ. ‘ಇಂಥ ಬ್ಲಡಿ ಯೂಸ್ ಲೆಸ್ಸನ್ನು ಯಾಕಾದ್ರೂ ಕಟ್ಟಿದ್ದಾರೋ, ಅಪ್ಪ, ಅಮ್ಮ; ಮಕ್ಕಳು ಗುಡ್ ಫ಼ಾರ್ ನಥಿಂಗ್ ಆಗಿಬಿಟ್ಟಾರು’ ಎಂದೆಲ್ಲ ಗೊಣಗಿಕೊಳ್ಳುತ್ತಿರುತ್ತಿದ್ದ.

ರಾತ್ರೆ ಮಲಗುವ ಕೋಣೆಯಲ್ಲಿ ವಿರಮಿಸುವಾಗ ಕೆ-ಡ್ರಾಮಾ ನೋಡುವುದು ಸುಮಾಗೆ ಅಚ್ಚುಮೆಚ್ಚು. ರಾತ್ರಿ ಹತ್ತು ಘಂಟೆಯ ಬಿಬಿಸಿ ನ್ಯೂಸ್ ನೋಡಿದ ಮೇಲೆ ತನ್ನ ಪರ್ಸನಲ್ ಈ-ಮೇಲ್ ನೋಡುವುದು ಮಹಾಧಿಕನ ಅಭ್ಯಾಸ. ಆಗಲೂ ಸುಮಾಳತ್ತ ತಾತ್ಸಾರದ ನೋಟ ಬೀರುತ್ತಿದ್ದ. ಅಂದೂ ಮಹಾಧಿಕ ತನ್ನ ಈ-ಮೇಲ್ ಗಳ ಮೇಲೆ ಕಣ್ಣು ಹಾಯಿಸುತ್ತಿದ್ದಾಗ, ಒಂದು ಅಧಿಕೃತ ಮೇಲ್ ಅವನ ಕಣ್ಣು ಸೆಳೆಯಿತು. ಟಿ.ವಿ ಲೈಸೆನ್ಸ್ ಆಫೀಸ್ ಈ ವರ್ಷ ಅವರು ಲೈಸೆನ್ಸ್ ಹಣ ಕಟ್ಟಿಲ್ಲವೆಂಬ ಎಚ್ಚರಿಕೆ ಕಳಿಸಿತ್ತು. ಮಹಾಧಿಕನ ಮೈಯೆಲ್ಲ ಉರಿದು ಹೋಯಿತು. ವಾರದಲ್ಲಿ ನಾಲ್ಕು ದಿವಸ ಮನೆಯಲ್ಲಿ ಎಮ್ಮೆಯಂತೆ ಮೆಂದು ಬಿದ್ದಿರುತ್ತಾಳೆ, ಸಮಯಕ್ಕೆ ಸರಿಯಾಗಿ ಬಿಲ್ ಕಟ್ಟುವುದಿಲ್ಲ, ಮಾಡಬೇಕಾದ ಕೆಲಸ ಮಾಡುವುದಿಲ್ಲ ಎಂದೆಲ್ಲ ಎಗರಾಡಿದ. ತಾನೂ ತಿರುಗಿ ಬಿದ್ದರೆ, ಗಲಾಟೆಯಾಗಿ, ಮಕ್ಕಳು ಎದ್ದು ರಂಪವಾಗುತ್ತೆ ಎಂದು, ಬಂದ ಸಿಟ್ಟನ್ನೆಲ್ಲ ಅದುಮಿಕೊಂಡು, “ತಪ್ಪಾಯ್ತು ಮಹಾರಾಯ, ಮುಂದಿನ ಸಲ ಮರೆಯದೇ ಕಟ್ಟುತ್ತೇನೆ. ಹೇಗಿದ್ದರೂ ಕಂಪ್ಯೂಟರ್ ಮುಂದೆ ಕೂತಿದ್ದೀಯ, ಆನ್ಲೈನ್ ಪೇ ಮಾಡಿಬಿಡು” ಎಂದು, ಟಿವಿ ಆರಿಸಿ, ಮುಸುಕು ಹಾಕಿ ಮಲಗಿಬಿಟ್ಟಳು ಸುಮಾ. ಎಲ್ಲದಕ್ಕೂ ನಾನೇ ಬೇಕು ಎಂದೆಲ್ಲ ಗೊಣಗುತ್ತ, ಆನ್ಲೈನ್ ನಲ್ಲೇ ಹಣ ಕಟ್ಟಿ ಮಹಾಧಿಕ್ ಉರುಳಿಕೊಂಡ.

ಮುಂದಿನ ಎರಡು ದಿನ ಅಂತಾರಾಷ್ಟ್ರೀಯ ಕಾನ್ಫರೆನ್ಸಿನಲ್ಲಿ ಮಂಡಿಸಲಿರುವ ಪ್ರಬಂಧದ ತಯಾರಿಯಲ್ಲೇ ಮಹಾಧಿಕ ಮುಳುಗಿದ್ದ. ಅಲ್ಲಿಗೆ ಹೋದಾಗ ಖರ್ಚಿಗೆ ಬೇಕಾಗುವ ಹಣವನ್ನು ಫಾರಿನ್ ಕರೆನ್ಸಿ ಕಾರ್ಡಿಗೆ ಚಾರ್ಜ್ ಮಾಡಲು ಫೋನಿನಲ್ಲಿ ಬ್ಯಾಂಕಿನ ap ತೆಗೆದವನಿಗೆ ಮೊದಲಿನ ನಾಲ್ಕು ಟ್ರಾನ್ಸಾಕ್ಷನ್ ಅಪರಿಚಿತ ಎನಿಸಿತು. ಪಕ್ಕದ ಊರಿನಲ್ಲಿ ಆಪಲ್ ಪೇ ನಲ್ಲಿ ಹಣ ಉಪಯೋಗಿಸಿರುವ ಮಾಹಿತಿ ಇತ್ತು. ಏನೋ ಮೋಸ ಇದೆ ಎಂದು ಅರಿವಾದೊಡನೆ ಬ್ಯಾಂಕಿಗೆ ಕರೆ ಮಾಡಿದ. ಎಲ್ಲ ವಿವರಗಳನ್ನು ಪಡೆದ ಬ್ಯಾಂಕಿನವರು, ನಿನ್ನ ಈಗಿನ ಕಾರ್ಡನ್ನು ರದ್ದು ಮಾಡಿ, ಹೊಸದನ್ನು ಕಳಿಸುತ್ತೇವೆಂದು ತಿಳಿಸಿದರು. ಇದು ಮೊದಲನೇ ಬಾರಿ ನೀನು ಮೋಸಹೋಗುತ್ತಿದ್ದಿಯ, ಸ್ವಲ್ಪವೇ ಹಣ ಕದ್ದಿದ್ದಾರೆ ಹಾಗಾಗಿ ಆದ ನಷ್ಟವನ್ನು ನಾವೇ ಭರಿಸುತ್ತೇವೆ ಎಂದು ಸಾಂತ್ವನಿಸಿದ್ದಲ್ಲದೇ ಇನ್ನು ಮುಂದೆ ಜಾಗ್ರತೆಯಲ್ಲಿರು ಎಂದೂ ಎಚ್ಚರಿಸಿದರು. ನೀನು ಉಪಯೋಗಿಸಿದ ಟಿವಿ ಲೈಸೆನ್ಸ್ ಸೈಟ್ ಮೋಸದ ಜಾಲ, ಈ ಪ್ರಸಂಗವನ್ನು ಫ್ರಾಡ್ ವಿಭಾಗಕ್ಕೆ ತಿಳಿಸಬೇಕಾಗುತ್ತದೆ, ಅವರೇ ಹೆಚ್ಚಿನ ವಿವರಗಳಿಗಾಗಿ ನಿನಗೆ ಫೋನ್ ಕೂಡ ಮಾಡಬಹುದೆಂದು ಹೇಳಿದರು. ಸಧ್ಯ, ಸಣ್ಣದರಲ್ಲೇ ಪಾರಾಗಿಬಿಟ್ಟೆ, ಇದಕ್ಕೆಲ್ಲ ಸುಮಾನೇ ಕಾರಣ ಎಂದು ಸಮಾಧಾನಪಟ್ಟುಕೊಳ್ಳುತ್ತಲೇ ಉರಿದುಕೊಂಡ. ಮನೆಗೆ ಬಂದವನೇ, ಬಟ್ಟೆ ಬದಲಾಯಿಸದೇ ಸುಮಾನ ಮೇಲೆ ಹರಿಹಾಯ್ದ. ಸುಮಾ ಉತ್ತರಿಸುವ ಮೊದಲೇ ಮಹಾಧಿಕನ ಫೋನ್ ರಿಂಗಣಿಸಿತು.


ಮಹಾಧಿಕ ಫೋನಿನಲ್ಲಿ ಬಂದ ನಂಬರ್ ಬ್ಯಾಂಕಿನದು ಎಂದು ತೋರುತ್ತಿದ್ದಂತೇ ಹಾರಿ ಬಿದ್ದು ಸ್ಟಡಿಗೆ ಓಡಿದ. ಅವನ ಊಹೆಯಂತೇ ಅದು ಬ್ಯಾಂಕಿನ ಫ್ರಾಡ್ ವಿಭಾಗದ್ದೆಂದು ಫೋನ್ ಮಾಡಿದಾತ ಖಚಿತ ಪಡಿಸಿ ತನ್ನ ಹೆಸರು ಟಿಮ್ ಎಂದು ಪರಿಚಯಿಸಿಕೊಂಡ. ಮೊದಲಿನಿಂದ ಕೊನೆಯವರೆಗೆ ವಿಶದವಾಗಿ ಮಹಾಧಿಕ ಹೇಳಿದ ವಿವರಗಳನ್ನೆಲ್ಲ ತೆಗೆದುಕೊಂಡ ಟಿಮ್, “ಇದು ಸಾಮಾನ್ಯದ ಸ್ಕ್ಯಾಮ್ ಅಲ್ಲ. ನಮಗೆ ಈ ಕೆಲವು ವಾರಗಳಲ್ಲಿ ಅನೇಕ ಗ್ರಾಹಕರು ಈ ಸ್ಕ್ಯಾಮ್ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾರ್ಡ್ ಬದಲಾಯಿಸಿದರೂ, ಖಾತೆಯ ಮಾಹಿತಿ ಪಡೆದ ಪುಂಡರು ಖಾತೆಯಿಂದ ಹಣ ಹೊಡೆಯುತ್ತಿದ್ದಾರೆ. ನೀನು ಬೇಗನೆ ಅಕ್ರಮ ಟ್ರಾನ್ಸಾಕ್ಷನ್ ಗಳನ್ನು ಪತ್ತೆ ಹಚ್ಚಿ ನಮಗೆ ತಿಳಿಸಿದ್ದು ಒಳ್ಳೆಯದಾಯಿತು. ಕೇವಲ ಕಾರ್ಡ್ ಬದಲಾಯಿಸಿದರೆ ಸಾಲದು, ನಿನ್ನ ಖಾತೆಯನ್ನೇ ಬದಲಾಯಿಸಬೇಕು ” ಎಂದು ವಿವರಿಸಿದಾಗ ಬೆವರುತ್ತಿದ್ದ ಮಹಾಧಿಕನಿಗೆ ಫ್ಯಾನಿನ ತಂಗಾಳಿ ಬಡಿದಂತಾಯ್ತು. ತಾನು ತೆಗೆದುಕೊಂಡ ಕ್ರಮ ಸರಿಯಾದದ್ದು ಎಂಬ ಶಿಫಾರಸ್ಸು ಸಿಕ್ಕಿದ್ದಕ್ಕೆ ಪುಳಕಿತಗೊಂಡ. ತಡ ಮಾಡದೇ ಟಿಮ್ ಹೇಳಿದಂತೆ ಫೋನಿನ apನಲ್ಲಿ ಆತ ಕೊಟ್ಟ ಖಾತೆಗೆ ತನ್ನ ಖಾತೆಯಲ್ಲಿದ್ದ ಹಣವನ್ನೆಲ್ಲ ap ಕೊಟ್ಟ ಎಚ್ಚರಿಕೆಗಳನ್ನೆಲ್ಲ ಧಿಕ್ಕರಿಸಿ ವರ್ಗಾಯಿಸಿದ. “ಹಣವೆಲ್ಲ ವರ್ಗಾವಣೆ ಆಯಿತಲ್ಲ, ಈಗ ಹೊಸ ಖಾತೆಯನ್ನು ತೆಗೆಯೋಣ” ಎಂದು ಟಿಮ್ ಹೇಳುತ್ತಿದ್ದಂತೇ ಫೋನ್ ಕಟ್ಟಾಯಿತು. ಅದೇ ನಂಬರಿಗೆ ಮತ್ತೆ ಮತ್ತೆ ಫೋನಾಯಿಸಿದರೂ ಎಂಗೇಜ್ ಟೋನ್ ಬಂತೇ ಹೊರತು ಟಿಮ್ ನ ದನಿ ಕೇಳ ಬರಲಿಲ್ಲ. ತಾನು ಖೆಡ್ಡಾಕ್ಕೆ ಬಿದ್ದೆ ಎಂದು ಮಹಾಧಿಕನಿಗೆ ಅರಿವಾಗತೊಡಗಿತು. ಬ್ಯಾಂಕ್ ap ಖಾತೆ ಬ್ಯಾಲೆನ್ಸ್ ಶೂನ್ಯ ಎಂದು ತೋರಿಸುತ್ತಿತ್ತು. ಹತಾಶೆ, ದುಃಖ, ಕೋಪಗಳೆಲ್ಲ ಮೇಳೈಸಿ ಮಹಾಧಿಕ ಕೂಗುತ್ತ, ಬೂಟು, ಟೈ, ಬಟ್ಟೆಗಳನ್ನು ಕಿತ್ತೆಸೆಯುತ್ತಿದ್ದ. ಅವನ ಕೂಗನ್ನು ಕೇಳಿ ಓಡಿ ಬಂದ ಸುಮಾ ಬಾಗಿಲ ಬಳಿ ಬೆಕ್ಕಸ ಬೆರಗಾಗಿ ನಿಂತಿದ್ದಳು.

-ರಾಂ