ಚಿತ್ರ ಬರೆಸಿದ ಕವಿತೆ

 ಓದುಗರಿಗೆಲ್ಲ ಆತ್ಮೀಯ ನಮಸ್ಕಾರ,
ಸಾಮಾಜಿಕ ಜಾಲತಾಣಗಳು ಮನುಷ್ಯನ ಭಾವಾಭಿವ್ಯಕ್ತಿಗೆ ಸಶಕ್ತ ಮಾಧ್ಯಮಗಾಳಾಗಿವೆ. ಬರವಣಿಗೆ, ಹಾಡು, ಅನಿಸಿಕೆ ಅಭಿಪ್ರಾಯಗಾಲ ಜೊತೆಗೇ ಸೋಶಿಯಲ್ ಮೀಡಿಯಾಗಳಲ್ಲಿ ಫೋಟೋ ಹಾಕುವುದು, ಬಹಳಷ್ಟು ಜನರ ಪ್ರಮುಖವಾದ ಹವ್ಯಾಸವಾಗಿ ಬದಲಾಗಿದೆ. ಫೋಟೋ ವಿಡಿಯೋ ಹಾಕುವ ಕಾಯಕವೇ ಹಣಗಳಿಸುವ ಉತ್ತಮ ವೇದಿಕೆಯಾಗಿಯೂ ಮಾರ್ಪಟ್ಟಿದೆ. ಒಂದಿಷ್ಟು ಜನ ತಮ್ಮ ವೈಯಕ್ತಿಕ ಜೀವನವನ್ನು ಚಿತ್ರಗಳ ಮೂಲಕ ಜಗತ್ತಿನ ಮುಂದೆ ಅನಾವರಣ ಗೊಳಿಸಿದರೆ, ಮತ್ತೊಂದಷ್ಟು ಜನ ಹೂವು, ಹಣ್ಣು, ನೀರು, ಆಕಾಶ, ಕೀಟ, ಹಕ್ಕಿ ಅಂತೆಲ್ಲ ನಮ್ಮ ಸುತ್ತಲಿನ ಸುಂದರ ಜಗತ್ತನ್ನು ಇನ್ನೂ ಸುಂದರವಾಗಿ ತಮ್ಮ ಚಿತ್ರಗಳ ಮೂಲಕ ಚಿತ್ರಿಸಿ ನಮ್ಮ ಮುಂದಿಟ್ಟು ರಂಜಿಸುತ್ತಾರೆ. ಈ ಚಿತ್ರಗಳು ಪರಿಚಯವೇ ಇಲ್ಲದ ಜಗತ್ತಿನ ಅದ್ಯಾವುದೋ ಮೂಲೆಯಲ್ಲಿದ್ದುಕೊಂಡು ಮತ್ತೊಬ್ಬ ಸಮಾನಸಕ್ತನ ಭಾವಕೋಶದ ಪದರನ್ನು ಮೆತ್ತಗೆ ತಟ್ಟಿ, ಸ್ಫೂರ್ತಿ ಕೊಡುತ್ತವೆ. ಕವಿಮನಸನ್ನು ಆವರಿಸಲು ಯಶಸ್ವಿಯಾದ ಒಂದೇ ಒಂದು ಭಾವಚಿತ್ರ ಸಾವಿರ ಭಾವಗಳನ್ನು ಪದಗಳಲ್ಲಿ ಹೊಮ್ಮಿಸಲೂಬಹುದು.

ನಾನು ಆಗಾಗ್ಯೆ, ನನ್ನ ಕ್ಯಾಮೆರಾ ಮತ್ತು ಫೋನಿನಲ್ಲಿ ತೆಗೆದ ಚಿತ್ರಗಳನ್ನ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ಎಂಬ ಸಾಮಾಜಿಕ ಜಾಲತಾಣಗಲ್ಲಿ ಹಂಚಿಕೊಳ್ಳುತ್ತಾ ಇರುತ್ತೇನೆ. ಅಲ್ಲಿರುವ ಕೆಲ ಕವಿ ಹೃದಯಗಳಿಗೆ ನಾನು ಹಂಚಿಕೊಂಡ ಚಿತ್ರಗಳು ಇಷ್ಟವಾಗಿ ಅವರ ಮನ ಸೃಜಿಸಿದ ಭಾವವನ್ನು ಅಕ್ಷರರೂಪಕ್ಕಿಳಿಸಿ ನನ್ನೊಂದಿಗೆ ಹಂಚಿಕೊಳ್ಳುತ್ತಾರೆ.
ಇತ್ತೀಚಿಗೆ ಲ್ಯಾಂಡ್ ಸ್ಕೇಪ್, ಹೂ, ನದಿ, ಚಿಕ್ಕ ಚಂದ್ರರ ಫೋಟೋ ಕ್ಲಿಕ್ ಮಾಡುವಾಗಲೆಲ್ಲ, ಈ ಸ್ನೇಹಿತರು ನೆನಪಾಗಿ ಬಿಡುತ್ತಾರೆ. ಈ ಚಿತ್ರ ಇವರಿಗೆ ಇಷ್ಟ ಆಗಬಹುದು/ಆಗುತ್ತದೆ ಎಂದು ಮನಸ್ಸು ಹೇಳುತ್ತದೆ.

ನಾನು ಕ್ಲಿಕ್ಕಿಸಿದ ಭಾವಚಿತ್ರವನ್ನು ಸ್ಫೂರ್ತಿಯಾಗಿ ಕವಿತೆಯನ್ನು
ಬರೆದು ಕಳಿಸುವ ನನ್ನ ಮೆಚ್ಚಿನ ಮೇದಿನಿ, ಈಶ್ವರ ಭಟ್ ಕೆ, ಮತ್ತು ಗುರುರಾಜ ಹೇರ್ಳೆ ಅವರನ್ನು ಅನಿವಾಸಿ ಬಳಗಕ್ಕೆ ಪರಿಚಯಿಸಿ,
ಚಿತ್ರಗಳೊಂದಿಗೆ, ಅವರ ಕವಿತೆ ಹಂಚಿಕೊಳ್ಳುತ್ತಿರುವೆ .
—ಅಮಿತಾ ರವಿಕಿರಣ್ ( ವಾರದ ಸಂಪಾದಕಿ)
ಈ ನೀಲಿಯಾಚೆಗೆ....

ಈ ನೀಲಿಯಾಚೆಗೆ ಆ ಮೋಡದೀಚಿಗೆ
ನಗುತಿರುವ ಸಗ್ಗವೊಂದಿದೆ ಅಲ್ಲಿ ಬಾ
ನೀಲಿಯೊಳು ಮೈಮರೆತು ಮೋಡದೊಳು
ಮರೆಯಾಗಿ ಜಗವನ್ನೆ ಹೊರನೂಕಿ ಮೆರೆಯೋಣ ಬಾ

ಬಾನು ಭುವಿ ಮೈಮರೆತು ಮಾತನಾಡುವುದಲ್ಲಿ
ಮರದ ಮಾತೆಲ್ಲವೂ ಮೋಡದೊಡನೆ ಧುಮ್ಮಿಕ್ಕಿ
ಹಾಲ್ನೊರೆಯ ತೇಲಿಸುವ ನದಿಯೊಂದು
ಸಂಭಾಷಿಸಿಹುದು ತೀರದೊಡನೆ

ಮಾತು ಮರೆತಿಹ ಮನಸು
ನೋಟ ಮರೆತಿಹ ಅಕ್ಷಿ
ಕಾಲ ಪ್ರವಾಹದಲಿ ಕಳೆಯೋಣ ಬಾ
ಮೌನದಾಚೆಯ ಮಾತು ಕಣ್ಣಿನಾಚೆಯ ನೋಟ
ಹೇಳುತಿದೆ ಏನನ್ನೊ ಕೇಳೋಣ ಬಾ

ಕುಂತಲ್ಲಿ ಏನಿಹುದು, ನಿಂತಲ್ಲಿ ಸೊಗಸೇನು
ಸಾಗಿ ಹೋಗೋಣ ಆ ತೀರದೆಡೆಗೆ
ನೀಲಿಯಾಚೆಯ ನಾಡು ಮೋಡದೀಚೆಯ
ಜಾಗ ಸೃಷ್ಟಿಯಾಗಿಹ ನೀಲ ಸ್ವರ್ಗದೆಡೆಗೆ

ತಬ್ಬುವುದೆಂದರೇನು ಸಖೀ?!

ತಬ್ಬುವುದೆಂದರೇನು ಸಖೀ?!
ತೋಳುಗಳ ಬಂಧನವೇ?
ಹೃದಯದ ಬೆಸುಗೆಯೇ
ಅಗಲಿರಲಾರೆನೆಂದು ಕೈ ಮೇಲೆ ಕೈಯಿಟ್ಟ ಪ್ರಮಾಣವೇ?

ತಬ್ಬುವುದೆಂದರೇನು ಸಖೀ?
ದಿನದ ಅಷ್ಟೂ ಘಳಿಗೆಯಲ್ಲೂ
ಜೊತೆಗಿದ್ದು
ಅಂಟಿಯೂ ಅಂಟದಂತೆ
ನವಿರಾಗಿ ತಾಗುತ್ತಾ
ಕಣ್ಣಲ್ಲೇ ಹೊರಡಿಸುವ ಪ್ರೇಮದ ನೋಟವೇ?

ತಬ್ಬುವುದೆಂದರೇನು ಸಖೀ?
ನೀಲಾಕಾಶವು
ನೀಲಸಮುದ್ರವ ಕರೆಯುತ್ತಾ
ನಾ ಕೆಳಗಿಳಿದೆ, ನೀ ಮೇಲೆ ಬಾ ಎನ್ನುವ
ಸಂಭ್ರಮದಿ
ತಾಗಿಯೂ, ತಾಗದಿರುವುದೇ
ತಬ್ಬುವುದೆಂದರೇನು ಸಖೀ?!

ಈಶ್ವರ ಭಟ್ ಕೆ (ಕಿರಣ),

ಮೂಲತಃ ಕಾಸರಗೋಡು ಕೇರಳದವರು. ಈಗ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿ. ಹವ್ಯಾಸ ಬರಹ, ತಿರುಗಾಟ.
ಗಡಿನಾಡಿನ ಸೀಮೆಯವರು ಆಗಿದ್ದಕ್ಕೂ ಏನೋ, ಕಿರಣರಿಗೆ ದಕ್ಷಿಣ ಭಾರತದ ಎಲ್ಲ ಭಾಷೆಗಳೂ ಮಾತಾಡಲು ಮತ್ತು ಓದಲು ಬರೆಯಲು ಬರುತ್ತದೆ ಅದೇ ಕಾರಣದಿಂದ ಆ ಭಾಷೆಯ ಕಥೆ, ಕವನ, ಭಜನೆಗಳನ್ನು ತುಂಬಾ ಸುಂದರವಾಗಿ ಕನ್ನಡಕ್ಕೆ ಅನುವಾದಿಸುತ್ತಾರೆ.
ಇವರ ಕವಿತೆಗಳು ಸರಳವಾಗಿ ಹಾಡಿಸಿಕೊಂಡು ಹೋಗುತ್ತವೆ. ರಾಗಕ್ಕೆ, ತಾಳಕ್ಕೆ ಹೊಂದುವ ಸಾಹಿತ್ಯ ಬರೆಯುವ ಇವರು, ಹಾಸ್ಯಬರಹ, ಮತ್ತೆ ಅಷ್ಟೇ ಗಂಭೀರ ವಿಷಯಗಳನ್ನೂ ಬರೆಯಬಲ್ಲರು.

ಮಲ್ಲಿಗೆಯವಳು.

ಹೂವಬುಟ್ಟಿಯ ಹೊತ್ತು ಮಲ್ಲಿಗೇ ಮಲ್ಲಿಗೇ
ಎಂದೆನುತ ಬಂದಳೋ ಬಿಂಕದವಳು
ಮೊಳಕೆ ಎಷ್ಟೆಂದರೆ ಕಣ್ಣಲ್ಲೆ ಗದರಿಸುತ
ಹಣದ ಲೆಕ್ಕಾಚಾರ ಯಾಕೆಂಬಳು!

ಮೊಳಕೆ ಮೂವತ್ತಾಯ್ತೆ? ಮೊನ್ನೆ ಇಷ್ಟಿರಲಿಲ್ಲ
ಪಿಸುಮಾತಿಗಳಿಗಿಷ್ಟು ಕೋಪಗೊಂಡು;
ಮಲ್ಲಿಗೆಯ ಗಿಡಕೆಲ್ಲ ರೋಗ ಬಂದಿದೆ ಒಡೆಯ
ಮೊನ್ನೆಯಷ್ಟಿಲ್ಲ ಹೂ ಎಂದೆಂಬಳು.

ಒಂದು ಮೊಳ ಸಾಕೆನಗೆ, ತೆಗೆದುಕೋ ನಲುವತ್ತು
ಎಂದಾಡಿದರೆ ಮತ್ತೆ ಜನ್ಮ ಹೊರಗೆ;
ಮಾಲೆ ಕಟ್ಟುವ ಸಮಯ ಪರಿಮಳವ ಕುಡಿದೆಹೆನು
ನಾ ಹೇಳುವಷ್ಟನೇ ಕೊಡು ಎಂದಳು.

ಮೊಳ ಕತ್ತರಿಸುವಾಗ ಒಂದಿಷ್ಟು ಹೆಚ್ಚಿಸುತ
ಜೊತೆಗಷ್ಟು ಗುಲಾಬಿ ತೆಗೆದಿಡುತಲಿ;
ಹೂವನ್ನು ಹೆಚ್ಚಿಸುವ ಖುಷಿ ತುಂಬುಮೊಗದಲ್ಲಿ
ನಾಳಿನಾ ಭರವಸೆಯ ನಗು ನಕ್ಕಳು.
ಸೂರ್ಯಾಸ್ತ!

ಅಲ್ಲಿ ಕೆರೆಯಂಚಿನಲಿ, ಮುಳುಗುತಿಹ ನೇಸರಗೆ
ಮರದ ಹಸಿರನು ಕಪ್ಪು ಮಾಡುವಾಸೆ
ಇಲ್ಲಿಯೋ ತಂಗಾಳಿ ಬಿಸಿಯೇರೆ ಹಣಕಿಸುತ
ಹತ್ತಿರಕೆ ಕಳಿಸುವುದು, ಒಲವಿನಾಸೆ!

ಎಷ್ಟು ಮಾತುಗಳಾಡಿ, ಜಗಳದಲಿ ಒಂದಾಗಿ
ಮತ್ತೆ ಮಾತಿನ ದೋಣಿ ತೇಲಿಹೋಗಿ
ಸುತ್ತ ಕತ್ತಲೆ ಹಬ್ಬಿ ಮಾತು ಮೌನಕೆ ದಣಿದು
ಅವಳ ಸಾಮೀಪ್ಯವನೆ ಅಲೆವ ರೋಗಿ

ಹಾರುವುದು ಎದೆಗನಸು ನೂರು ಮೈಲಿಗಳಾಚೆ
ಅಲ್ಲಿಯೂ ನೇಸರನು ಮುಳುಗುತಿಹನು
ಅವಳಿಗೂ ಇದೆ ನೆಪವು, ಇಂತಹದೆ ಬೇಸರವು
ಏನನೋ ಕಾಯುವುದು, ಹೆಳವ ನಾನು.

ಒಂದು ದಿನವಾದರೂ ಸಂಜೆಯಾಗದೆ ಇರಲಿ
ದೂರವಿಹ ವಿರಹಿಗಳ ಎದೆಯ ಸುಡದೆ ಮಂದಮಾರುತ ಹೋಗಿ ಸುಖಿಪವರ ಜೊತೆಗಿರಲಿ
ನನ್ನ ಕಾಡಲುಬೇಡ, ಅವಳು ಸಿಗದೆ




ಗುರುರಾಜ ಹೇರ್ಳೆ

 ಮೂಲತಃ ಉಡುಪಿ ಜಿಲ್ಲೆಯ ಸಾಲಿಗ್ರಾಮ ಎಂಬ ಊರಿನವರು. ಪ್ರಸ್ತುತ  ಬಹರೈನ್ ಎಂಬ ಪುಟ್ಟ ದ್ವೀಪ ರಾಷ್ಟ್ರದಲ್ಲಿ ಉದ್ಯೋಗಿ  ವಾಸ. ಪ್ರಾರಂಭಿಕ ಓದು, ಬೆಳವಣಿಗೆ ಎಲ್ಲ ಉಡುಪಿಯಲ್ಲೇ ಆದರೂ, ಉನ್ನತ ವ್ಯಾಸಂಗ ಮತ್ತು ಉದ್ಯೋಗಕ್ಕಾಗಿ ಬೆಂಗಳೂರಿನಲ್ಲಿಯೂ ಒಂದಷ್ಟು ಕಾಲ ವಾಸಮಾಡಿದ್ದಾರೆ. 
ಇವರು ಒಳ್ಳೆಯ ಹಾಡುಗಾರರು. ಭಾವಗೀತೆಗಳ ಮೇಲೆ ಒಲವು ಜಾಸ್ತಿ. ಮಕ್ಕಳ ಹಾಡುಗಳು, ಪ್ರೇಮಗೀತೆಗಳನ್ನು ಬರೆಯುತ್ತಾರೆ. ಬರೆದ ಪದ್ಯಕ್ಕೆ ರಾಗ ಹಾಕಿ ಹಾಡುತ್ತಾರೆ ಕೂಡ

ಸಾಗರ ಸನ್ನಿಧಿ

ನೀಲ ಸಾಗರವನ್ನು ನೆಚ್ಚಿ ದೋಣಿಯೊಂದು ಸಾಗಿದೆ,
ಹಾಯಿ ಬಿಚ್ಚಿ ಗಾಳಿ ಬೀಸೋ ದಿಕ್ಕಿನತ್ತೇ ನಡೆದಿದೆ

ನಾಂತದಲ್ಲಿ ಬಾನು ಬುವಿಯು ಸೇರಿದಂತೆ ಭಾಸವು
ತೀರ ಸಿಗದ ದಾರಿಯಲ್ಲಿ ಮುಗಿಯದಿರುವ ಯಾನವು

ಒಮ್ಮೆ ಇಳಿತ ಒಮ್ಮೆ ಭರತ, ಏಳು ಬೀಳಿನಲೆಗಳು
ಒಮ್ಮೆ ನೋವು ಒಮ್ಮೆ ನಲಿವು, ಇದುವೇ ಜೀವನ ರೀತಿಯು

ಕಣ್ಣು ಹಾಯಿಸಿದಷ್ಟು ನೀರು ಕುಡಿಯಲಿನಿತು ಸಾಧ್ಯವೇ ?
ಬಾಳಿನಲ್ಲೂ ನೂರು ಜನರು, ಎಲ್ಲ ಜೊತೆಗೆ ಬರುವರೇ ?

ಅಲ್ಲಿ ಇಲ್ಲಿ ಸಿಗಲು ಬಂಡೆ ದಣಿವನಾರಿಸಬೇಕಿದೆ,
ಹಳೆಯ ತಪ್ಪನೆಲ್ಲ ಮರೆಯದೆ ದಾರಿ ಸಾಗಬೇಕಿದೆ
ಗಮ್ಯ ತಲುಪಬೇಕಿದೆ.
ಬಂದೇ ಬರುತಾವ ಕಾಲ.

ಈ ಸಮಯವೂ ಸರಿದು ಹೋಗಲೇಬೇಕು
ನಮಗೆಂದೇ ಒಂದು ಕಾಲ ಬರಲೇಬೇಕು

ಕರೆದ ಹಾಲದು ಕೆನೆಯ ಕಟ್ಟಲುಬೇಕು
ಹೆಪ್ಪುತಾಗೆ ಗಟ್ಟಿಮೊಸರು ಆಗಲೇಬೇಕು,
ಕಡೆಯಲದನು ಬೆಣ್ಣೆ ಮೇಲೆ ತೇಲಲೇಬೇಕು
ಬಿಸಿತಾಕಲು ಕರಗಿ ತುಪ್ಪವಾಗಲೇಬೇಕು

ಹರುಷ ಹೊನಲಿನ ನದಿಯು ಉಕ್ಕಲೇಬೇಕು
ಮುನಿದ ದೈವವು ಮುಗುಳು ನಗಲುಬೇಕು
ಬಾಡಿದಂತ ಲತೆಯು ಮತ್ತೆ ಚಿಗುರಲುಬೇಕು
ಮುದುಡಿದ ತಾವರೆ ಅರಳುತ ನಲಿಯಲೇಬೇಕು

ಇರುಳಲಿ ಕರಗಿದ ತಿಂಗಳು ಮೂಡಲೇಬೇಕು
ಮುಳುಗಿದ ರವಿ ಮೂಡಣದಿ ಹುಟ್ಟಲೇಬೇಕು
ಧಗೆಯೇರಲು ಮೇಘ ಕರಗಿ ಸುರಿಯಲೇಬೇಕು,
ಸುಖ ಶಾಂತಿ ನೆಮ್ಮದಿಯ ತರಲೇಬೇಕು


ಕವನ-ಭಾವಯಾನ

ಬರೆಯಬೇಕು!

ಬರೆಯಲೇಬೇಕು ಹಾಗೆಂದು ಮಾಡಿಟ್ಟುಕೊಂಡ ವಿಷಯಗಳ ಪಟ್ಟಿ ದಿನದಿಂದ ದಿನಕ್ಕೆ ಉದ್ದವಾಗುತ್ತಲೇ ಇದೆ ಆದರೆ ಬರೆಯಲು ಮಾತ್ರ
ಆಗುತ್ತಿಲ್ಲ. ನನ್ನ ಪ್ರಾಥಮಿಕ ಶಾಲೆಯಲ್ಲಿ ಇದ್ದ ಅಕ್ಕವರು ಇಂಥಹ ‘ಆಗಲ್ಲ ಆಗ್ತಿಲ್ಲ’ ಅನ್ನೋ ಪದಗಳನ್ನ ಕೇಳಿದಾಗ ಹೇಳುತ್ತಿದ್ದ
‘ಕಳ್ಳಂಗೊಂದು ಪಿಳ್ಳೆ ನೆವ’ ಅನ್ನೋ ಗಾದೆ ಇತ್ತೀಚಿಗೆ ಪದೇ ಪದೇ ನೆನಪಾಗುತ್ತದೆ.
ಸಮಯವೇ ಸಿಗ್ತಿಲ್ಲ ಎನು ಮಾಡಲಿ? ಅನ್ನುವ ಮಾತನ್ನು ಮನಸು ಬುದ್ಧಿಗೆ, ಬುದ್ಧಿ ಮನಸಿಗೆ ಆಗೀಗ ಹೇಳಿಕೊಳ್ಳುತ್ತಲೇ
ಪ್ರೌಡಶಾಲಾ ದಿನಗಳಲ್ಲಿ ಭೂಗೋಳ ಮತ್ತು ಕನ್ನಡ ಪಾಠ ಮಾಡುತ್ತಿದ್ದ ಲಕ್ಷ್ಮಣ್ ಸರ್ ‘ಸಮಯ ಯಾರಿಗೂ ಈ ತನಕ ಸಿಕ್ಕಿಲ್ಲ,
ಮಾಡ್ಕೋಬೇಕು, ಏನಾದ್ರೂ ಕಲೀಬೇಕು, ಸಾಧಿಸಬೇಕು, ಬೇಕು ಅಂದ್ರ!’ ಅಂತ ಹೇಳತಿದ್ದುದು ಕೂಡ ಇಂಥ ಸಂದರ್ಭದಲ್ಲಿ
ನೆನಪಾಗುತ್ತದೆ.
ಜೊತೆಗೆ ಈ ಸೋಶಿಯಲ್ ಮೀಡಿಯಾ ಅನ್ನುವ ವರರೂಪಿ ಶಾಪದ ಛಾಯೆಯಿಂದ ದೂರ ಉಳಿಯಬೇಕೆಂದರೂ ಆಗದು. ಅಲ್ಲೂ
ಕೆಲವರಂತೂ ಅದೆಷ್ಟು ಚಂದ ಬರೆಯುತ್ತಾರೆಂದರೆ, ಬರೀ ಎರಡೇ ಸಾಲುಗಳಲ್ಲಿ ಸೀದಾ ಮನದ ಬಾಗಿಲ ಕದ ತಟ್ಟಿಬಿಡುತ್ತಾರೆ. ಹೊಟ್ಟೆಕಿಚ್ಚು
ಹುಟ್ಟಿಸುತ್ತಾರೆ. ಮರೆತೇಹೋದಂತಿರುವ ಬರವಣಿಗೆಯ ಕಡೆಗೆ ಗಮನ ಕೊಡುವಂತೆ ಮಾಡುತ್ತಾರೆ. ಒಂದೂ ಮಾತಾಡದೆ ಸಾವಿರ
ವಿಷಯಗಳ ಹಚ್ಚೆ ಹಾಕಿಬಿಡುತ್ತಾರೆ.
ಇತ್ತೀಚಿಗೆ ಅಂತಹುದೇ ಒಂದು ಫೇಸ್ಬುಕ್ ಖಾತೆಯ ಪೋಸ್ಟುಗಳ ಮಾಯೆಗೆ ನಾನು ಒಳಗಾಗಿರುವೆ. ಬೆಟ್ಟದ ಹೂವು ಎಂಬ ಹೆಸರಿನಿಂದ
ಬರೆಯುವ ಇವರು ಅವಳೋ/ ಅವನೋ ಗೊತ್ತಿಲ್ಲ. ಹಿಂದಿ, ಉರ್ದು ಪದ್ಯಗಳ ಸಾಲುಗಳನ್ನು ತುಂಬಾ ಸುಂದರವಾಗಿ
ಅನುವಾದಿಸುತ್ತಾರೆ.
ಒಮ್ಮೆ ಓದಿದರೆ ಆಯ್ತು, ಮತ್ತೆ ನಾವೇ ಹುಡುಕಿ ಹೋಗಿ ಓದುವಷ್ಟು ಬೆಚ್ಚಗಿರುತ್ತವೆ ಆ ಅನುವಾದಗಳು, ಜೊತೆಗೆ ಅವರೂ ಆಗೀಗ
ಅವರ ಸ್ವಂತದ ಕವಿತೆಗಳನ್ನೂ ಪೋಸ್ಟ್ ಮಾಡುತ್ತಾರೆ. ಕೆಲವೊಮ್ಮೆ ಹೇಳದೆ ಕೇಳದೆ ಫೇಸ್ಬುಕ್ ಗೆ ರಜೆ ಹಾಕಿ ನಾಪತ್ತೆಯಾಗುತ್ತಾರೆ.
ಇಂಥಹ ಹಲವು ಅನಾಮಿಕ, ಅನಾಮಧೇಯ ಅಕೌಂಟ್ ಗಳು ಚಂದದ ಪದ್ಯಗಳನ್ನು ಪೋಸ್ಟ್ ಮಾಡುತ್ತವೆ. ಆದರೆ ನನಗೆ ಬರೆಯಲು
ಹಚ್ಚಿದ್ದು ಮಾತ್ರ ಈ ಬೆಟ್ಟದ ಹೂವು.
ಅವರ ಪೋಸ್ಟ್ಗಳಿಂದಾಗಿ ನಾನು ಗುಲ್ಜಾರ್ ರನ್ನು ಓದಲು ಶುರು ಮಾಡಿದೆ, ಮತ್ತೆ ಆಗೊಮ್ಮೆ ಈಗೊಮ್ಮೆ ಅವರ ಕವಿತೆ, ನುಡಿ,
ಶಾಯರಿ, ಗಝಲ್ಗಳ ಭಾವಾನುವಾದ ಮಾಡಲು ಪ್ರಯತ್ನಿಸಿದೆ. ನಿಮ್ಮ ಓದಿಗೆ ಈ ಸಂಚಿಕೆಯಲ್ಲಿ ನಾನು ಅಂತರ್ಜಾಲದಲ್ಲಿ ಓದಿ
ಭಾವಾನುವಾದ ಮಾಡಿರುವ ಕೆಲವನ್ನು ಇಲ್ಲಿ ಲಗತ್ತಿಸಿದ್ದೇನೆ. ಓದಿ ನಿಮ್ಮ ಅಭಿಪ್ರಾಯಗಳನ್ನು ತಿಳಿಸಲು ಮರೆಯದಿರಿ.
ನಿಮ್ಮ
ಅಮಿತಾ ರವಿಕಿರಣ್

ತುಟಿಗಳಾಡಿದ ಪದಗಳಾಗಿದ್ದರೆ
ತಪ್ಪು ಹುಡುಕಬಹುದಿತ್ತು ಆದರೆ
ಅದೆಲ್ಲ ಹೇಳಿದ್ದು ಆಕೆಯ ಕಣ್ಣಾಲಿಗಳು.


ಕಣ್ಣುಗಳಾಗಿದ್ದಕ್ಕೆ ಸತ್ಯ ಹೇಳಿಬಿಟ್ಟವು,
ತುಟಿ ಉಸುರಿದ ಮಾತುಗಳಿಗಾಗಿ
ದೇವರ ಆಣೆ ಇತ್ತ ಮೇಲೂ
ವಾದ ವಿವಾದ ನಡೆಯುತ್ತವೆ ಇಲ್ಲಿ..


ಹೂವಿನಂತೆ ನಿನ್ನ ತುಟಿ ಅರಳಿ,
ನಿನ್ನ ದನಿಯ ಕಂಪು ಘಮಘಮಿಸಲಿ


ಈ ಒಂಟಿತನ ಎಷ್ಟು ಹಿತವಾಗಿದೆ ಗೊತ್ತಾ,
ಸಾವಿರ ಪ್ರಶ್ನೆಗಳ ಕೇಳುತ್ತಾದರೂ
ಉತ್ತರ ಬೇಕೆಂಬ ಹಠ ಮಾಡುವುದಿಲ್ಲ.


ಈ ಜಗದ ಕಣ್ಣಗೆ ನಾನು ವಿಚಿತ್ರ,
ವಿಕ್ಷಿಪ್ತಳೂ ಹೌದು
ಕಾರಣ, ನನಗೆಲ್ಲವೂ ನೆನಪಿರುತ್ತದೆ.


ನಿನ್ನಾ ಎಷ್ಟು ನಂಬ್ತೀನಿ ಗೊತ್ತಾ?
ತುಟಿ ಉಸುರುವಾಗ,
ಮನದ ತುಂಬಾ, ಸಂಶಯದ ಬಿಳಿಲುಗಳಲ್ಲಿ
ಭಯ ಜೋಕಾಲಿಯಾಡುತ್ತಿರುತ್ತದೆ.


ಪ್ರೀತಿ ಎಂದರೇನು?
ಎಂಬುದಷ್ಟೇ ನನ್ನ ಪ್ರಶ್ನೆಯಾಗಿತ್ತು.
ಅಸಫಲ ಇಚ್ಛೆಯ ನಿಟ್ಟುಸಿರು ಅನ್ನುವ ಉತ್ತರ
ನೀ ತೊರೆದ ಗಳಿಗೆ ತಿಳಿಸಿತು.


ಏನಾದರೊಂದು
ಮಾತಾಡುತ್ತಲೇ ಇರು,
ನೀ ಸುಮ್ಮನಿದ್ದರೆ
ಜನ ಕೇಳುತ್ತಾರೆ!