ಚಿತ್ರ ಬರೆಸಿದ ಕವಿತೆ

 ಓದುಗರಿಗೆಲ್ಲ ಆತ್ಮೀಯ ನಮಸ್ಕಾರ,
ಸಾಮಾಜಿಕ ಜಾಲತಾಣಗಳು ಮನುಷ್ಯನ ಭಾವಾಭಿವ್ಯಕ್ತಿಗೆ ಸಶಕ್ತ ಮಾಧ್ಯಮಗಾಳಾಗಿವೆ. ಬರವಣಿಗೆ, ಹಾಡು, ಅನಿಸಿಕೆ ಅಭಿಪ್ರಾಯಗಾಲ ಜೊತೆಗೇ ಸೋಶಿಯಲ್ ಮೀಡಿಯಾಗಳಲ್ಲಿ ಫೋಟೋ ಹಾಕುವುದು, ಬಹಳಷ್ಟು ಜನರ ಪ್ರಮುಖವಾದ ಹವ್ಯಾಸವಾಗಿ ಬದಲಾಗಿದೆ. ಫೋಟೋ ವಿಡಿಯೋ ಹಾಕುವ ಕಾಯಕವೇ ಹಣಗಳಿಸುವ ಉತ್ತಮ ವೇದಿಕೆಯಾಗಿಯೂ ಮಾರ್ಪಟ್ಟಿದೆ. ಒಂದಿಷ್ಟು ಜನ ತಮ್ಮ ವೈಯಕ್ತಿಕ ಜೀವನವನ್ನು ಚಿತ್ರಗಳ ಮೂಲಕ ಜಗತ್ತಿನ ಮುಂದೆ ಅನಾವರಣ ಗೊಳಿಸಿದರೆ, ಮತ್ತೊಂದಷ್ಟು ಜನ ಹೂವು, ಹಣ್ಣು, ನೀರು, ಆಕಾಶ, ಕೀಟ, ಹಕ್ಕಿ ಅಂತೆಲ್ಲ ನಮ್ಮ ಸುತ್ತಲಿನ ಸುಂದರ ಜಗತ್ತನ್ನು ಇನ್ನೂ ಸುಂದರವಾಗಿ ತಮ್ಮ ಚಿತ್ರಗಳ ಮೂಲಕ ಚಿತ್ರಿಸಿ ನಮ್ಮ ಮುಂದಿಟ್ಟು ರಂಜಿಸುತ್ತಾರೆ. ಈ ಚಿತ್ರಗಳು ಪರಿಚಯವೇ ಇಲ್ಲದ ಜಗತ್ತಿನ ಅದ್ಯಾವುದೋ ಮೂಲೆಯಲ್ಲಿದ್ದುಕೊಂಡು ಮತ್ತೊಬ್ಬ ಸಮಾನಸಕ್ತನ ಭಾವಕೋಶದ ಪದರನ್ನು ಮೆತ್ತಗೆ ತಟ್ಟಿ, ಸ್ಫೂರ್ತಿ ಕೊಡುತ್ತವೆ. ಕವಿಮನಸನ್ನು ಆವರಿಸಲು ಯಶಸ್ವಿಯಾದ ಒಂದೇ ಒಂದು ಭಾವಚಿತ್ರ ಸಾವಿರ ಭಾವಗಳನ್ನು ಪದಗಳಲ್ಲಿ ಹೊಮ್ಮಿಸಲೂಬಹುದು.

ನಾನು ಆಗಾಗ್ಯೆ, ನನ್ನ ಕ್ಯಾಮೆರಾ ಮತ್ತು ಫೋನಿನಲ್ಲಿ ತೆಗೆದ ಚಿತ್ರಗಳನ್ನ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ಎಂಬ ಸಾಮಾಜಿಕ ಜಾಲತಾಣಗಲ್ಲಿ ಹಂಚಿಕೊಳ್ಳುತ್ತಾ ಇರುತ್ತೇನೆ. ಅಲ್ಲಿರುವ ಕೆಲ ಕವಿ ಹೃದಯಗಳಿಗೆ ನಾನು ಹಂಚಿಕೊಂಡ ಚಿತ್ರಗಳು ಇಷ್ಟವಾಗಿ ಅವರ ಮನ ಸೃಜಿಸಿದ ಭಾವವನ್ನು ಅಕ್ಷರರೂಪಕ್ಕಿಳಿಸಿ ನನ್ನೊಂದಿಗೆ ಹಂಚಿಕೊಳ್ಳುತ್ತಾರೆ.
ಇತ್ತೀಚಿಗೆ ಲ್ಯಾಂಡ್ ಸ್ಕೇಪ್, ಹೂ, ನದಿ, ಚಿಕ್ಕ ಚಂದ್ರರ ಫೋಟೋ ಕ್ಲಿಕ್ ಮಾಡುವಾಗಲೆಲ್ಲ, ಈ ಸ್ನೇಹಿತರು ನೆನಪಾಗಿ ಬಿಡುತ್ತಾರೆ. ಈ ಚಿತ್ರ ಇವರಿಗೆ ಇಷ್ಟ ಆಗಬಹುದು/ಆಗುತ್ತದೆ ಎಂದು ಮನಸ್ಸು ಹೇಳುತ್ತದೆ.

ನಾನು ಕ್ಲಿಕ್ಕಿಸಿದ ಭಾವಚಿತ್ರವನ್ನು ಸ್ಫೂರ್ತಿಯಾಗಿ ಕವಿತೆಯನ್ನು
ಬರೆದು ಕಳಿಸುವ ನನ್ನ ಮೆಚ್ಚಿನ ಮೇದಿನಿ, ಈಶ್ವರ ಭಟ್ ಕೆ, ಮತ್ತು ಗುರುರಾಜ ಹೇರ್ಳೆ ಅವರನ್ನು ಅನಿವಾಸಿ ಬಳಗಕ್ಕೆ ಪರಿಚಯಿಸಿ,
ಚಿತ್ರಗಳೊಂದಿಗೆ, ಅವರ ಕವಿತೆ ಹಂಚಿಕೊಳ್ಳುತ್ತಿರುವೆ .
—ಅಮಿತಾ ರವಿಕಿರಣ್ ( ವಾರದ ಸಂಪಾದಕಿ)
ಈ ನೀಲಿಯಾಚೆಗೆ....

ಈ ನೀಲಿಯಾಚೆಗೆ ಆ ಮೋಡದೀಚಿಗೆ
ನಗುತಿರುವ ಸಗ್ಗವೊಂದಿದೆ ಅಲ್ಲಿ ಬಾ
ನೀಲಿಯೊಳು ಮೈಮರೆತು ಮೋಡದೊಳು
ಮರೆಯಾಗಿ ಜಗವನ್ನೆ ಹೊರನೂಕಿ ಮೆರೆಯೋಣ ಬಾ

ಬಾನು ಭುವಿ ಮೈಮರೆತು ಮಾತನಾಡುವುದಲ್ಲಿ
ಮರದ ಮಾತೆಲ್ಲವೂ ಮೋಡದೊಡನೆ ಧುಮ್ಮಿಕ್ಕಿ
ಹಾಲ್ನೊರೆಯ ತೇಲಿಸುವ ನದಿಯೊಂದು
ಸಂಭಾಷಿಸಿಹುದು ತೀರದೊಡನೆ

ಮಾತು ಮರೆತಿಹ ಮನಸು
ನೋಟ ಮರೆತಿಹ ಅಕ್ಷಿ
ಕಾಲ ಪ್ರವಾಹದಲಿ ಕಳೆಯೋಣ ಬಾ
ಮೌನದಾಚೆಯ ಮಾತು ಕಣ್ಣಿನಾಚೆಯ ನೋಟ
ಹೇಳುತಿದೆ ಏನನ್ನೊ ಕೇಳೋಣ ಬಾ

ಕುಂತಲ್ಲಿ ಏನಿಹುದು, ನಿಂತಲ್ಲಿ ಸೊಗಸೇನು
ಸಾಗಿ ಹೋಗೋಣ ಆ ತೀರದೆಡೆಗೆ
ನೀಲಿಯಾಚೆಯ ನಾಡು ಮೋಡದೀಚೆಯ
ಜಾಗ ಸೃಷ್ಟಿಯಾಗಿಹ ನೀಲ ಸ್ವರ್ಗದೆಡೆಗೆ

ತಬ್ಬುವುದೆಂದರೇನು ಸಖೀ?!

ತಬ್ಬುವುದೆಂದರೇನು ಸಖೀ?!
ತೋಳುಗಳ ಬಂಧನವೇ?
ಹೃದಯದ ಬೆಸುಗೆಯೇ
ಅಗಲಿರಲಾರೆನೆಂದು ಕೈ ಮೇಲೆ ಕೈಯಿಟ್ಟ ಪ್ರಮಾಣವೇ?

ತಬ್ಬುವುದೆಂದರೇನು ಸಖೀ?
ದಿನದ ಅಷ್ಟೂ ಘಳಿಗೆಯಲ್ಲೂ
ಜೊತೆಗಿದ್ದು
ಅಂಟಿಯೂ ಅಂಟದಂತೆ
ನವಿರಾಗಿ ತಾಗುತ್ತಾ
ಕಣ್ಣಲ್ಲೇ ಹೊರಡಿಸುವ ಪ್ರೇಮದ ನೋಟವೇ?

ತಬ್ಬುವುದೆಂದರೇನು ಸಖೀ?
ನೀಲಾಕಾಶವು
ನೀಲಸಮುದ್ರವ ಕರೆಯುತ್ತಾ
ನಾ ಕೆಳಗಿಳಿದೆ, ನೀ ಮೇಲೆ ಬಾ ಎನ್ನುವ
ಸಂಭ್ರಮದಿ
ತಾಗಿಯೂ, ತಾಗದಿರುವುದೇ
ತಬ್ಬುವುದೆಂದರೇನು ಸಖೀ?!

ಈಶ್ವರ ಭಟ್ ಕೆ (ಕಿರಣ),

ಮೂಲತಃ ಕಾಸರಗೋಡು ಕೇರಳದವರು. ಈಗ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿ. ಹವ್ಯಾಸ ಬರಹ, ತಿರುಗಾಟ.
ಗಡಿನಾಡಿನ ಸೀಮೆಯವರು ಆಗಿದ್ದಕ್ಕೂ ಏನೋ, ಕಿರಣರಿಗೆ ದಕ್ಷಿಣ ಭಾರತದ ಎಲ್ಲ ಭಾಷೆಗಳೂ ಮಾತಾಡಲು ಮತ್ತು ಓದಲು ಬರೆಯಲು ಬರುತ್ತದೆ ಅದೇ ಕಾರಣದಿಂದ ಆ ಭಾಷೆಯ ಕಥೆ, ಕವನ, ಭಜನೆಗಳನ್ನು ತುಂಬಾ ಸುಂದರವಾಗಿ ಕನ್ನಡಕ್ಕೆ ಅನುವಾದಿಸುತ್ತಾರೆ.
ಇವರ ಕವಿತೆಗಳು ಸರಳವಾಗಿ ಹಾಡಿಸಿಕೊಂಡು ಹೋಗುತ್ತವೆ. ರಾಗಕ್ಕೆ, ತಾಳಕ್ಕೆ ಹೊಂದುವ ಸಾಹಿತ್ಯ ಬರೆಯುವ ಇವರು, ಹಾಸ್ಯಬರಹ, ಮತ್ತೆ ಅಷ್ಟೇ ಗಂಭೀರ ವಿಷಯಗಳನ್ನೂ ಬರೆಯಬಲ್ಲರು.

ಮಲ್ಲಿಗೆಯವಳು.

ಹೂವಬುಟ್ಟಿಯ ಹೊತ್ತು ಮಲ್ಲಿಗೇ ಮಲ್ಲಿಗೇ
ಎಂದೆನುತ ಬಂದಳೋ ಬಿಂಕದವಳು
ಮೊಳಕೆ ಎಷ್ಟೆಂದರೆ ಕಣ್ಣಲ್ಲೆ ಗದರಿಸುತ
ಹಣದ ಲೆಕ್ಕಾಚಾರ ಯಾಕೆಂಬಳು!

ಮೊಳಕೆ ಮೂವತ್ತಾಯ್ತೆ? ಮೊನ್ನೆ ಇಷ್ಟಿರಲಿಲ್ಲ
ಪಿಸುಮಾತಿಗಳಿಗಿಷ್ಟು ಕೋಪಗೊಂಡು;
ಮಲ್ಲಿಗೆಯ ಗಿಡಕೆಲ್ಲ ರೋಗ ಬಂದಿದೆ ಒಡೆಯ
ಮೊನ್ನೆಯಷ್ಟಿಲ್ಲ ಹೂ ಎಂದೆಂಬಳು.

ಒಂದು ಮೊಳ ಸಾಕೆನಗೆ, ತೆಗೆದುಕೋ ನಲುವತ್ತು
ಎಂದಾಡಿದರೆ ಮತ್ತೆ ಜನ್ಮ ಹೊರಗೆ;
ಮಾಲೆ ಕಟ್ಟುವ ಸಮಯ ಪರಿಮಳವ ಕುಡಿದೆಹೆನು
ನಾ ಹೇಳುವಷ್ಟನೇ ಕೊಡು ಎಂದಳು.

ಮೊಳ ಕತ್ತರಿಸುವಾಗ ಒಂದಿಷ್ಟು ಹೆಚ್ಚಿಸುತ
ಜೊತೆಗಷ್ಟು ಗುಲಾಬಿ ತೆಗೆದಿಡುತಲಿ;
ಹೂವನ್ನು ಹೆಚ್ಚಿಸುವ ಖುಷಿ ತುಂಬುಮೊಗದಲ್ಲಿ
ನಾಳಿನಾ ಭರವಸೆಯ ನಗು ನಕ್ಕಳು.
ಸೂರ್ಯಾಸ್ತ!

ಅಲ್ಲಿ ಕೆರೆಯಂಚಿನಲಿ, ಮುಳುಗುತಿಹ ನೇಸರಗೆ
ಮರದ ಹಸಿರನು ಕಪ್ಪು ಮಾಡುವಾಸೆ
ಇಲ್ಲಿಯೋ ತಂಗಾಳಿ ಬಿಸಿಯೇರೆ ಹಣಕಿಸುತ
ಹತ್ತಿರಕೆ ಕಳಿಸುವುದು, ಒಲವಿನಾಸೆ!

ಎಷ್ಟು ಮಾತುಗಳಾಡಿ, ಜಗಳದಲಿ ಒಂದಾಗಿ
ಮತ್ತೆ ಮಾತಿನ ದೋಣಿ ತೇಲಿಹೋಗಿ
ಸುತ್ತ ಕತ್ತಲೆ ಹಬ್ಬಿ ಮಾತು ಮೌನಕೆ ದಣಿದು
ಅವಳ ಸಾಮೀಪ್ಯವನೆ ಅಲೆವ ರೋಗಿ

ಹಾರುವುದು ಎದೆಗನಸು ನೂರು ಮೈಲಿಗಳಾಚೆ
ಅಲ್ಲಿಯೂ ನೇಸರನು ಮುಳುಗುತಿಹನು
ಅವಳಿಗೂ ಇದೆ ನೆಪವು, ಇಂತಹದೆ ಬೇಸರವು
ಏನನೋ ಕಾಯುವುದು, ಹೆಳವ ನಾನು.

ಒಂದು ದಿನವಾದರೂ ಸಂಜೆಯಾಗದೆ ಇರಲಿ
ದೂರವಿಹ ವಿರಹಿಗಳ ಎದೆಯ ಸುಡದೆ ಮಂದಮಾರುತ ಹೋಗಿ ಸುಖಿಪವರ ಜೊತೆಗಿರಲಿ
ನನ್ನ ಕಾಡಲುಬೇಡ, ಅವಳು ಸಿಗದೆ




ಗುರುರಾಜ ಹೇರ್ಳೆ

 ಮೂಲತಃ ಉಡುಪಿ ಜಿಲ್ಲೆಯ ಸಾಲಿಗ್ರಾಮ ಎಂಬ ಊರಿನವರು. ಪ್ರಸ್ತುತ  ಬಹರೈನ್ ಎಂಬ ಪುಟ್ಟ ದ್ವೀಪ ರಾಷ್ಟ್ರದಲ್ಲಿ ಉದ್ಯೋಗಿ  ವಾಸ. ಪ್ರಾರಂಭಿಕ ಓದು, ಬೆಳವಣಿಗೆ ಎಲ್ಲ ಉಡುಪಿಯಲ್ಲೇ ಆದರೂ, ಉನ್ನತ ವ್ಯಾಸಂಗ ಮತ್ತು ಉದ್ಯೋಗಕ್ಕಾಗಿ ಬೆಂಗಳೂರಿನಲ್ಲಿಯೂ ಒಂದಷ್ಟು ಕಾಲ ವಾಸಮಾಡಿದ್ದಾರೆ. 
ಇವರು ಒಳ್ಳೆಯ ಹಾಡುಗಾರರು. ಭಾವಗೀತೆಗಳ ಮೇಲೆ ಒಲವು ಜಾಸ್ತಿ. ಮಕ್ಕಳ ಹಾಡುಗಳು, ಪ್ರೇಮಗೀತೆಗಳನ್ನು ಬರೆಯುತ್ತಾರೆ. ಬರೆದ ಪದ್ಯಕ್ಕೆ ರಾಗ ಹಾಕಿ ಹಾಡುತ್ತಾರೆ ಕೂಡ

ಸಾಗರ ಸನ್ನಿಧಿ

ನೀಲ ಸಾಗರವನ್ನು ನೆಚ್ಚಿ ದೋಣಿಯೊಂದು ಸಾಗಿದೆ,
ಹಾಯಿ ಬಿಚ್ಚಿ ಗಾಳಿ ಬೀಸೋ ದಿಕ್ಕಿನತ್ತೇ ನಡೆದಿದೆ

ನಾಂತದಲ್ಲಿ ಬಾನು ಬುವಿಯು ಸೇರಿದಂತೆ ಭಾಸವು
ತೀರ ಸಿಗದ ದಾರಿಯಲ್ಲಿ ಮುಗಿಯದಿರುವ ಯಾನವು

ಒಮ್ಮೆ ಇಳಿತ ಒಮ್ಮೆ ಭರತ, ಏಳು ಬೀಳಿನಲೆಗಳು
ಒಮ್ಮೆ ನೋವು ಒಮ್ಮೆ ನಲಿವು, ಇದುವೇ ಜೀವನ ರೀತಿಯು

ಕಣ್ಣು ಹಾಯಿಸಿದಷ್ಟು ನೀರು ಕುಡಿಯಲಿನಿತು ಸಾಧ್ಯವೇ ?
ಬಾಳಿನಲ್ಲೂ ನೂರು ಜನರು, ಎಲ್ಲ ಜೊತೆಗೆ ಬರುವರೇ ?

ಅಲ್ಲಿ ಇಲ್ಲಿ ಸಿಗಲು ಬಂಡೆ ದಣಿವನಾರಿಸಬೇಕಿದೆ,
ಹಳೆಯ ತಪ್ಪನೆಲ್ಲ ಮರೆಯದೆ ದಾರಿ ಸಾಗಬೇಕಿದೆ
ಗಮ್ಯ ತಲುಪಬೇಕಿದೆ.
ಬಂದೇ ಬರುತಾವ ಕಾಲ.

ಈ ಸಮಯವೂ ಸರಿದು ಹೋಗಲೇಬೇಕು
ನಮಗೆಂದೇ ಒಂದು ಕಾಲ ಬರಲೇಬೇಕು

ಕರೆದ ಹಾಲದು ಕೆನೆಯ ಕಟ್ಟಲುಬೇಕು
ಹೆಪ್ಪುತಾಗೆ ಗಟ್ಟಿಮೊಸರು ಆಗಲೇಬೇಕು,
ಕಡೆಯಲದನು ಬೆಣ್ಣೆ ಮೇಲೆ ತೇಲಲೇಬೇಕು
ಬಿಸಿತಾಕಲು ಕರಗಿ ತುಪ್ಪವಾಗಲೇಬೇಕು

ಹರುಷ ಹೊನಲಿನ ನದಿಯು ಉಕ್ಕಲೇಬೇಕು
ಮುನಿದ ದೈವವು ಮುಗುಳು ನಗಲುಬೇಕು
ಬಾಡಿದಂತ ಲತೆಯು ಮತ್ತೆ ಚಿಗುರಲುಬೇಕು
ಮುದುಡಿದ ತಾವರೆ ಅರಳುತ ನಲಿಯಲೇಬೇಕು

ಇರುಳಲಿ ಕರಗಿದ ತಿಂಗಳು ಮೂಡಲೇಬೇಕು
ಮುಳುಗಿದ ರವಿ ಮೂಡಣದಿ ಹುಟ್ಟಲೇಬೇಕು
ಧಗೆಯೇರಲು ಮೇಘ ಕರಗಿ ಸುರಿಯಲೇಬೇಕು,
ಸುಖ ಶಾಂತಿ ನೆಮ್ಮದಿಯ ತರಲೇಬೇಕು


ಫೋಟೋ ಕವನ ಸಂಚಿಕೆ ೨

ಹನಿಗಳು ಮತ್ತು ಹಾದಿಗಳು

ಕಾವ್ಯ ಕಟ್ಟುವ ಕೆಲಸ ಬಹಳ ಮೌಲಿಕವಾದದ್ದು. ಕವಿತೆಗಳು  ಏಕಾಂತದ ಕವಿತೆಗಳಾಗಿರಬಹುದು, ಲೋಕಾಂತದ ಕವಿತೆಗಳಾಗಿರಬಹುದು.  ಭಾವನಾತ್ಮಕ,  ಉತ್ಪ್ರೇಕ್ಷಿತ, ವೈಚಾರಿಕ, ವರ್ಣನಾತ್ಮಕ, ಪ್ರಾಮಾಣಿಕ ಯಾವುದೂ ಆಗಿರಬಹುದು. ಬಂಡಾಯ, ಖಂಡನೆ, ನೋವು, ವಿಡಂಬನೆ, ಹಾಸ್ಯ , ಶೃಂಗಾರ, ಪ್ರೀತಿ ವಿರಹ, ವಿದಾಯ, ವೇದನೆ, ಭಕ್ತಿ, ಬಿನ್ನಹದ ಕೇಂದ್ರಗಳನ್ನು ಹೊಂದಿರಬಹುದು. ಹೋಲಿಕೆ, ವೈರುಧ್ಯಗಳ ಹಾದಿಯನ್ನು ತುಳಿಯಬಹುದು. ಓದುಗರಿಗೆ ಲೌಕಿಕ, ಅಲೌಕಿದ ಅನುಭಗಳನ್ನು ನೀಡಬಲ್ಲದು.

ಕಾವ್ಯ ಓದುಗರನ್ನು ಮುದಗೊಳಿಸಬಲ್ಲವು. ಚಿಂತನೆಗೆ ತಳ್ಳಬಹುದು. ಭಾವ ಪರವಶತೆಯ ಅನುಭವ
ನೀಡಬಲ್ಲವು, ಸುಖಿಸುವಂತೆ ಮಾಡಬಲ್ಲವು, ನಗಿಸಬಲ್ಲವು, ಅಳಿಸಬಲ್ಲವು, ಅಚ್ಚರಿಗೆ ತಳ್ಳಬಹುದು, ಎಚ್ಚರಿಕೆಯನ್ನು ನೀಡಬಲ್ಲವು. ಜೀವನ ಪ್ರೀತಿಯನ್ನು ಹೆಚ್ಚಿಸಬಲ್ಲವು. ಕಾವ್ಯಕ್ಕೆ ಇರುವ ಹರವು ವಿಸ್ತಾರವಾದದ್ದು.ಅವುಗಳು ಹುಟ್ಟುವ ಸಮಯವನ್ನು ಕವಿ ಸಮಯ ಎನ್ನುತ್ತಾರೆ.

ವಾರದ ಛಾಯಾಗ್ರಾಹಕ ರಾಮಶರಣ ಲಕ್ಷ್ಮೀನಾರಾಯಣ ಮತ್ತು ಕವಿ ಕೇಶವ ಕುಲಕರ್ಣಿ. ಕವಿತ್ವವನ್ನು ಉದ್ದೀಪನಗೊಳಿಸಿ ಒರೆಗೆ ಹಚ್ಚಿರುವುದು  ರಾಮಶರಣರ  ಕ್ಯಾಮರಾ ಹಿಂದಿನ ಕಣ್ಣುಗಳು.  ಕಣ್ಣಿಗೆ ಕಂಡದ್ದನ್ನು ಹೀಗೇ ಸೆರೆಹಿಡಿಯಬೇಕೆನ್ನುವುದು. ಫೋಟಾಗ್ರಫಿ ಪ್ರಿಯರ ಆಸೆ.  ಅಂತಹ ಕ್ಷಣವನ್ನು ಸೆರೆಹಿಡಿದಾಗಿನ ಅದ್ಭುತ  ರೋಮಾಂಚನ ಅವರಿಗೆ ಕಾವ್ಯವನ್ನು ಬರೆದಷ್ಟೇ ಸಂತೋಷ ನೀಡಬಲ್ಲುದು.  ನೋಡಿದಾಗೆಲ್ಲ ಮತ್ತೆ,ಮತ್ತೆ ಅವರಲ್ಲಿ ಸಂತಸವನ್ನು ಹೆಚ್ಚಿಸಿ, ಹೆಮ್ಮೆಯ ಭಾವವನ್ನು ಮೂಡಿಸಬಲ್ಲವು.

ಛಾಯಾಚಿತ್ರ ತೆಗೆಯುವವರು ಒಂದು ಚಿತ್ರದ ಮೂಲಕ ಕೇವಲ ಒಂದು ದೃಶ್ಯವನ್ನು ಒದಗಿಸಿದರು,
ಅದನ್ನು ಕವಿಗಳ ಮುಂದೆ ಹಿಡಿದಾಗ ಕವಿಗೆ ಕಾಣುವ ನೋಟಗಳು ಅನೇಕ. ವಾರದ ವಿಶೇಷ ಕೂಡ
ಅದೇ.

 ರಾಮಶರಣರ ಅಚ್ಚರಿ ತರುವ ನಿಖರತೆ, ನಿಚ್ಚಳತೆ,  ತಾಂತ್ರಿಕತೆ, ಸೌಂದರ್ಯ ಮತ್ತು ಭಾವಗಳನ್ನು ತುಂಬಿದ  ಚಿತ್ರಗಳು ನೋಡುಗರ ಕಣ್ಮನ ಸೆಳೆಯುತ್ತವೆ. ಅವೇ ಚಿತ್ರಗಳು ಕೇಶವರಿಗೆ ಕವಿ ಸಮಯವನ್ನು ಒದಗಿಸಿವೆ.  ಕೆಲವು ಚಿತ್ರಗಳಂತೂ ಕವಿ ಮನಸ್ಸಿನಲ್ಲಿ ಹಲವು ಭಾವಗಳನ್ನು ಹೊಮ್ಮಿಸಲು ಸಮರ್ಥವಾಗಿವೆ.

ರಾಮಶರಣ್‌ ಒಂದೇ ವಿಷಯಕ್ಕೆ ಸಂಬಂಧಿಸಿದಂತ ಹಲವು ಚಿತ್ರಗಳನ್ನು ಒದಗಿಸಿ ಸರಣಿಗೆ ಒಂದು
ಶೀರ್ಷಿಕೆಯನ್ನು ನೀಡಿದ್ದರು. ಅದನ್ನೇ ಇಲ್ಲಿ ನೀಡಿದ್ದೇನೆ. ಕೇಶವ್‌ ಸರಣಿಯ ಒಂದು ಅಥವಾ ಹಲವು ಚಿತ್ರಗಳನ್ನು ಆಯ್ದು ಕವನಗಳನ್ನು ರಚಿಸಿದ್ದಾರೆ. ಇನ್ನೂ ವಿಶೇಷವೆಂದರೆ ತಾವೇ ಪೀಠಿಕೆಯ ಕಿರು ಗವನಗಳನ್ನು ಬರೆಯುತ್ತ ಒಂದು ಚಿತ್ರ ಹೇಗಿರಬೇಕೆಂದು ಹೇಳುತ್ತ ಜೊತೆಗೆ ಚಿತ್ರಕ್ಕೆ ಬರೆದ ಕವನದಲ್ಲಿ ಏನಿರಬಾರದೆಂದೂ ವಿವರಿಸಿದ್ದಾರೆ. ಅದು ಅವರ ಕುಶಲಮತಿ ಪ್ರತಿಭೆಗೆ ಸಾಕ್ಷಿಯಾಗಿದೆ.

ಓದಿರಿ. ಚಿತ್ರಗಳನ್ನು ಕೂಲಂಕುಶವಾಗಿ ಅವಲೋಕಿಸಿ. ಮತ್ತೆ ಓದರಿ. ಮರೆಯದೆ ಕಮೆಂಟಿಸಿ- ಸಂ


ಪೀಠಿಕೆಯ ಕಿರುಗವನಗಳು:

ಒಂದು ಹೈಕುವನ್ನಾದರೂ

ಬರೆಸಿಕೊಳ್ಳದ ಫೋಟೊ

ಫೋಟೋನೇ ಅಲ್ಲ

ಈ ಫೋಟೋದ ಸಂಯೋಜನೆ ಹೇಗೆ

ಎಷ್ಟು ISO

ಎಷ್ಟು ದ್ಯುತಿರಂಧ್ರ

ಎಷ್ಟು ನಾಭಿದೂರ

ಎಷ್ಟು ಸಂಸ್ಕರಣ

ಎಂದು ವಿವರಣೆ ಕೇಳಿದ ದಿನ

ಫೋಟೋದೊಳಗಿನ ಕವಿತೆ

ಸತ್ತುಹೋಗುತ್ತದೆ

ʼಹನಿಗಳು ಸರ್‌ ಹನಿಗಳುʼ ಸರಣಿ: `ಇಬ್ಬನಿಗಳು`

ಜಗದ ಕೊಳೆಯ
ತೊಳೆಯೆ
ಇಳೆಗೆ ಬಂದೇ ಏನೇ
ಇಬ್ಬನಿ?
ರಾತ್ರಿಯೆಲ್ಲ ಬಿಕ್ಕಳಿಸಿ
ಜಾರದೇ ಉಳಿದ ಕಂಬನಿ
ಇಬ್ಬನಿ
ರಾತ್ರಿಯೆಲ್ಲ
ಅಪ್ಪಿತಬ್ಬಿ
ಅಪ್ಪಿತಪ್ಪಿ
ಉಳಿದ ಮುತ್ತಿನ ಹನಿ
ಇಬ್ಬನಿ
ಮುಂಜಾವಿನ ಕೊರಳಿಗೆ
ವಜ್ರದ ಹರಳು
ಇಬ್ಬನಿ
ನೇಸರನ ಸ್ವಾಗತಕೆ
ಥಳಿ ಹೊಡೆದ ನೀರು
ಇಬ್ಬನಿ

ರಾತ್ರಿಯ ಸೆಕೆಗೆ
ಮೂಡಿದ ಬೆವರು
ಇಬ್ಬನಿ
ಪ್ರೇಮಿಯ ಕೂದಲಿನ
ಅಂಚಿಗೆ ಉಳಿದ ಹನಿ
ಇಬ್ಬನಿ
ಕಣ್ಣು ಬಿಟ್ಟ ಮಗು
ಅಮ್ಮನನ್ನು ಕಂಡ ಖುಷಿಯಲ್ಲಿ
ಮೂಡಿದ ಕಣ್ಣಂಚಿನ ಪಸೆ
ಇಬ್ಬನಿ
ಮುಂಜಾವಿನೆದೆಯಿಂದ
    ದು
  ರಿ
ಬೀಳುವ ಹನಿ
ಇಬ್ಬನಿ
೧೦
ಮತ್ತೆ ಬೆಳಗಾಯಿತು
ಮತ್ತೆ ಹೊಸಜೀವ ಬಂದಿತು
ನಿಸರ್ಗದ ಆನಂದ ಬಾಷ್ಪ
ಇಬ್ಬನಿ

೧೧
ರಾತ್ರಿ ಹೊತ್ತು
ಯಾವುದೋ ಕೀಟ ಮಾಡಿದ ಗಾಯಕ್ಕೆ
ಎಲೆ ಮೇಲೆ ಮೂಡಿದ ಗುಳ್ಳೆ
ಇಬ್ಬನಿ
೧೨
ಅನಂತದಲಿ ಬಿಂದು
ಬಿಂದುವಿನಲಿ ಅನಂತ
ಒಂದು ಮಂಜಿನ ಹನಿ
ಯೊಳಗೊಂದು ಬ್ರಹ್ಮಾಂಡ
೧೩
ಎಲೆಯ ಮೇಲೆ
ಮುಂಜಾವಿನ
ಮುತ್ತಿನ ಗುರುತು
ಸ್ವಲ್ಪ ಹೊತ್ತು
ಹಾಗೇ ಇರಲಿ ಬಿಡು
೧೪
ಪದಗಳಲ್ಲಿ
ಹುಡುಕಿದರೂ ಸಿಗದ ಕವಿತೆ
ಪುಟ್ಟ ಹುಲ್ಲಿನೆಳೆಯ ಮೇಲೆ
ಮುಂಜಾವಿನ ಮಂಜಿನೊಳಗೆ
ನಗುತ್ತ ಕಣ್ಬಿಡುತ್ತಿತ್ತು

*****

ʼಹೋದಲೆಲ್ಲ ಹಾದಿ ʼ ಸರಣಿ: 

೧. ಬೆಂಚಿನ ಸ್ವಗತ

ಮುಂಜಾವಿನ ಬಾಗಿಲು ಅದೇ ತೆರೆದಿತ್ತು
ಅರ್ಲಿಮಾರ್ನಿಂಗ್ ವಾಕಿನ ಮಧ್ಯವಿರಾಮಕ್ಕೆ
ಬಂದು ನನ್ನ ಮೇಲೆ ಕೂತರು ಇಬ್ಬರು
ವಯಸ್ಸು ಎಪ್ಪತ್ತೋ ಎಂಬತ್ತೋ
ಒಬ್ಬರು ತಮ್ಮ ತೀರಿಹೋದ ಹೆಂಡತಿಯನ್ನು
ಪರದೇಶಕ್ಕೆ ಹೋದ ಮಕ್ಕಳನ್ನು ನೆನಯುತ್ತ
‘ನನ್ನ ಬದುಕು ಈ ಬೆಂಚಿನಂತೆ ಒಂಟಿ,’ ಎಂದು ಹಲುಬಿದರು.
ಇನ್ನೊಬ್ಬರು ಸಮಾಧಾನ ಮಾಡುತ್ತಿದ್ದರು
ಕಾಲೇಜಿಗೆ ಚಕ್ಕರ್
ನನ್ನ ಮೇಲೆ ಹಾಜರ್
ಕಿಲಿಕಿಲಿ ನಗು
ಚಿಲಿಪಿಲಿ ಮಾತು
ಕದ್ದು ಕದ್ದು ಮುತ್ತು
ಹುಸಿಮುನಿಸು
ಅಳುನಟನೆ
ತುಂಟನಗು
‘ನೀನು ನನ್ನನ್ನು ಎಷ್ಟು ಪ್ರೀತಿಸುತ್ತೀಯಾ?’ ಎಂದಳು
‘ಈ ಬೆಂಚು ಇಲ್ಲಿರುವವರೆಗೂ,’ ಎಂದ
ಅವನ ಕೆನ್ನೆಗೊಂದು ಮುತ್ತು ಸಿಕ್ಕಿತು
ಲಂಚ್ ಬ್ರೇಕಿನಲ್ಲಿ ಹತ್ತಿರದ ಆಫೀಸಿನಿಂದ ಬಂದು
ಡಬ್ಬಿ ಬಿಚ್ಚಿದರು; ಅವನ ಡಬ್ಬ ಇವನು
ಇವನ ಡಬ್ಬ ಅವಳು ಹಂಚಿಕೊಂಡರು
ಇವನ ಹೆಂಡತಿ ಕೊಡುವ ಕಾಟ ಅವಳು ಕೇಳಿಸಿಕೊಂಡಳು
ಅವಳ ಗಂಡ ಕೊಡುವ ಕಷ್ಟ ಇವನು ಕೇಳಿಸಿಕೊಂಡ
‘ನಮ್ಮ ಬದುಕು ಈ ಬೆಂಚಿನಂತೆ
ಎಲ್ಲೂ ಹೋಗುವುದಿಲ್ಲ, ಏನೂ ಆಗುವುದಿಲ್ಲ,’ ಎಂದರು
ಮತ್ತೆ ಆಫೀಸಿಗೆ ಹೋಗುವ ಸಮಯವಾಯಿತು
ಈಗ ರಾತ್ರಿಯ ನೀರವಮೌನದಲ್ಲಿ
ಬೀದಿದೀಪಗಳ ಮಬ್ಬುಬೆಳಕಲ್ಲಿ
ಒಂಟಿಯಾಗಿ
ದಿನದ ನೂರಾರು ಕತೆಗಳ ನೆನೆಯುತ್ತ
ದಿನದ ಸಾವಿರಾರು ಕವನಗಳ ಕನವರಿಸುತ್ತ
ನಿದ್ದೆ ಬರದೇ
ಕೂತೇ ಇದ್ದೇನೆ

೨. ಎಲ್ಲಿ ಹೋಗುವಿರಿ ಹೇಳಿ ಹಾದಿಗಳೇ

ಕಲ್ಲು ಮುಳ್ಳಿನ ಹಾದಿಯ
ನೆನಪುಗಳು ಕಳೆದಿಲ್ಲ
ಬಿದ್ದು ಕಲ್ಲಿನ ಮೇಲಾದ ಗಾಯದ ಗುರುತುಗಳು
ಚುಚ್ಚಿಸಿಕೊಂಡ ಅಪಮಾನಗಳು

ಇಲ್ಲಿ ಎಲ್ಲ ಒಳ್ಳೆಯವರು
ಎಂಬ ನಂಬಿಕೆಯಲ್ಲಿ
ಹಲ್ಲು ಕೊರೆದ ಹಾದಿಯಲ್ಲಿ
ಜೊತೆಗೆ ಬಂದವರು
ನನಗಿಂತ ಸ್ವಲ್ಪ ಹೆಚ್ಚೇ ನೋವುಂಡವರು

ಹೂವಿನ ದಾರಿಯ ಮೇಲೆ
ನಡೆಸುವೆ ಎಂದು ಭರವಸೆ ಕೊಟ್ಟವರು
ಹೂವಿನ ಜೊತೆ ಮುಳ್ಳೂ ಇರುತ್ತದೆ
ಎಂದು ಹೇಳುವುದನ್ನು ಮರೆತರು
ನನಗೆ ಅರಿವಾಗುವಷ್ಟರಲ್ಲಿ ಅವರಿದ್ದೂ ಇರಲಿಲ್ಲ

ಅಲ್ಲಿಯೂ ಸಲ್ಲಲಿಲ್ಲ
ಇಲ್ಲಿಗೂ ಒಗ್ಗಿಕೊಳ್ಳಲಿಲ್ಲ
ದೇಶಬಿಟ್ಟ ಪರದೇಸಿ
ಕಲ್ಲಿಗಿಂತ ಕಲ್ಲಾಗಿ
ಪರಸಿಕಲ್ಲಿನ ಹಾದಿಯ ಮೇಲೆ
ಅಂಗಡಿ ಅಂಗಡಿಗಳಲ್ಲಿ
ನಡೆವ ಜನರ ಮುಖಗಳಲ್ಲಿ
ಸುಖ ಸಂತೋಷ ಹುಡುಕುತ್ತೇನೆ
ಹಾದಿಹೋಕ ನಾನು
ಹಾದಿಹೋಕನಾಗಿಯೇ ಉಳಿದಿದ್ದೇನೆ

ವಾರಾಂತ್ಯಕ್ಕೆ ಬಿಡುವು ಹುಡುಕುತ್ತೇನೆ
ಹುಲ್ಲುಹಾಸಿನ ಹಾದಿಯ
ಫೋಟೋ ತೆಗೆದು
ಫೋನಿನ ವಾಲ್-ಪೇಪರ್ ಮಾಡಿಕೊಳ್ಳುತ್ತೇನೆ

ಹೈವೇಯ ಸೈನ್-ಬೋರ್ಡುಗಳು
ಈಗ ನನ್ನ ಮಿತ್ರರು
ನನ್ನ ಕಾರಿನ ದಾರಿ ಹೇಳಿಕೊಡುವವರು
ಹಗಲು ಸಂಜೆ ಅದೇ ಹಾದಿ
ಕಾರಿಗಿಂತ ಯಾಂತ್ರಿಕವಾಗಿ ಬದುಕು ನಡೆಸುತ್ತೇನೆ
*
ಕಾಲ ಮಾಗುತಿದೆ
ದಾರಿ ಸವೆಯುತಿದೆ
ತಾಣದ ಮರೀಚಿಕೆ
ಹಾಗೇ ಉಳಿದಿದೆ
ಹಾಗೇ ಉಳಿದರೇ ಬದುಕೆ?