ಹೊಸವರುಷಕ್ಕೊಂದು ಹಳೆಯ ಹರಟೆ

ನಮಸ್ಕಾರ ಅನಿವಾಸಿ ಬಳಗಕ್ಕೆ. ಇನ್ನೇನು ಬಂದೇ ಬಿಡಲಿರುವ ಕ್ರಿಸ್ಮಸ್ ಹಬ್ಬದ ಹಾಗೂ ಹೊಸವರುಷದ  ಹಾರ್ದಿಕ ಶುಭಾಶಯಗಳು. 

ದೇಶ- ಕಾಲ ಯಾವುದಿದ್ದರೇನು? ಮಾನವ ಜೀವ - ಭಾವ ಜಗತ್ತು ಮಾತ್ರ ಸದಾ ಅದೇ ಅಲ್ಲವೇ? ಅದಕ್ಕೆಂದೇ ತ್ರೇತೆಯ ಸೀತೆ, ದ್ವಾಪರದ ರಾಧೆ ಈಗಲೂ ನಮ್ಮನ್ನು ಕಾಡುತ್ತಾರೆ. ನನ್ನ ಹಳ್ಳಿಯ ನನ್ನ ಪರಿಧಿಗೆ ಬಂದ ಎಲ್ಲ ಹೆಂಗಳೆಯರದೂ ಒಂದೊಂದು ಕಥೆ.. ವ್ಯಥೆ. ಅದನ್ನೇ ಇಲ್ಲಿನ ಕವನ ಹೇಳಲು ಪ್ರಯತ್ನಿಸುತ್ತಿದೆ. ಹಾಗೆಯೇ ಒಂದು ಲಘು ಹರಟೆಯೂ ಉಂಟು. ಒಪ್ಪಿಸಿಕೊಳ್ಳಿ.

~ ಸಂಪಾದಕಿ

ನಮ್ಮೂರ ರಾಧೆಯರು..

 ನಮ್ಮೂರಲ್ಲಿ ಜುಳು ಜುಳು ಹರಿವ ತಂಪಾದ ನದಿಯಿಲ್ಲ.
ಹಿಂಡಿದರೆ ದಂಡಿ ಹಾಲು ಕರೆವ ದನದ ಮಂದೆಗಳಿಲ್ಲ.
ಒಣಬಿದಿರ ಕೊಳಲ ಮಾಡಿ ನುಡಿಸಿ ಕುಣಿಸುವ ಕೃಷ್ಣನೂ ಇಲ್ಲ.
ನಮ್ಮೂರ ಹೆಸರಂತೂ ಗೋಕುಲ- ಬೃಂದಾವನ ಮೊದಲೇ ಅಲ್ಲ.

ಆದರೇನು? ತುಸು ಪ್ರೀತಿಗೆ ಆಜನ್ಮ ಕಾಯುವ
ರಾಧೆಯರಿಗೇನೂ ಬರವಿಲ್ಲ.
ಸೀತೆ, ಗೀತೆ,ನಿಂಗಿ, ಸಂಗಿ ಒಳ ಭಾವದಲಿ
ರಾಧೆಯರೇ ಎಲ್ಲಾ.
ಒರಳು, ಒನಕೆ, ಒಲೆ, ತಪ್ಪಲೆಗಳ
ಎಸರಲ್ಲಿ ಕುದಿಯುತ್ತಲಿರುವರಲ್ಲ..
ದಣಿದ ಕಂಗಳು ಮುಚ್ಚಿದರೂ, ನಿದ್ದೆಯಲ್ಲೂ
ಒಲವ ಕನಸು ತೇಲುವುದಿಲ್ಲ.
ಸಾಂಗತ್ಯ, ಸಾಮೀಪ್ಯ, ಆತ್ಮದಾನಂದಗಳ
ಹೆಸರನ್ನೂ ಅರಿತವರಲ್ಲ..
ಸೆಳೆದೊಯ್ಯುವ ಸಮ್ಮೋಹನದ ರಾಗಕ್ಕಾಗಿ
ಆಜನ್ಮ ಕಾಯುತ್ತಲೇ ಇಹರಲ್ಲ?!

ಯಮುನೆ ಇರದಿದ್ದರೇನಂತೆ ಇಲ್ಲಿ
ಕಾಳಿಂಗರಿಗೇನೂ ಕೊರತೆ ಇಲ್ಲ.
ರಾಸ ರಚಿಸಲೆಂದೇ ರಸಿಕರು ಸುತ್ತಮುತ್ತ
ಕಾಯ್ದುಕೊಂಡಿಹರಲ್ಲ?!
ಪ್ರತಿಷ್ಠೆ, ಮರ್ಯಾದೆ, ರಕ್ಷಣೆಯ ಹೆಸರಲ್ಲಿ
ಚೈತನ್ಯ ಹೋಮ ನಡೆವುದಲ್ಲ..
ದ್ವಾಪರವಲ್ಲವಾದ್ದರಿಂದ ನರಕಾಸುರ ಬಂಧನದಿಂದ
ಈ ಗೋಪಿಕೆಯರಿಗೆ ಮುಕ್ತಿಯೇ ಇಲ್ಲ..

~ ಗೌರಿಪ್ರಸನ್ನ

ಕ್ಯಾಲೆಂಡರ್ ಪುರಾಣ

2025 ಅರಿವಿಲ್ಲದೇ ಉರುಳಿ  ಇನ್ನೇನು ಹೊಸ ವರುಷದ ಹೊಸಿಲಲ್ಲಿದ್ದೇವೆ. ಇಷ್ಟಕ್ಕೂ ಈ ಹೊಸ ವರ್ಷ ಅನ್ನೋದು ಏನು? ಅದೇ ಹಗಲು ರಾತ್ರಿಗಳು, ಅದೇ ಸೂರ್ಯ ಚಂದ್ರರು, ಅವೇ ಗಿಡಮರ-ಉಪವನಗಳು, ಅವೇ ಮಾನವ ಮನದ ರಾಗ ದ್ವೇಷ ಭಾವವೇಗಗಳು, ಅದೇ ಹೊಡೆದಾಟ ಬಡೆದಾಟಗಳು,ಅವೇ ಚರ್ವಿತ ಚರ್ವಣ ರಾಜಕೀಯ ಸಾಮಾಜಿಕ ಸುದ್ದಿ ಸಮಾಚಾರಗಳು, ಅವೇ ಹೊಸ ವರ್ಷದ ಹಳೆಯ ರೆಸುಲ್ಯೂಷನ್ ಗಳು.. ಬರೀ ಬದಲಾಗುವ ಕ್ಯಾಲೆಂಡರ್ ಹೊರತುಪಡಿಸಿ ಉಳಿದಿದ್ದೆಲ್ಲಾ ಅದೇ ಹಿಂದಿನದೇ. 

ಆದರೆ ಜಡ್ಡು ಕಟ್ಟಿದ ಮನಸ್ಸಿಗೆ ಯಾಂತ್ರಿಕವಾದ ಬದುಕಿಗೆ ಒಂದೆರಡು ಖುಷಿಯ ಕ್ಷಣಗಳು ಬೇಕು ಹಗುರಾಗಲು ಒಂದು ನೆಪಬೇಕು ಆ ನೆಪದಲ್ಲಿ ಆಪ್ತರೊಡನೆ, ಸ್ನೇಹಿತರೊಡನೆ ಬಂಧು ಬಾಂಧವರೊಡನೆ ಒಂದಷ್ಟು ಮಾತು, ಹರಟೆ, ನಗು, ಹಾಡು, ಕುಣಿತ, ತಿನ್ನುವುದು, ಕುಡಿಯುವುದು.. ಅವುಗಳ ಮೂಲಕ ಒಂದು ನಿರಾಳತೆಯನ್ನೂ, ಬಿಡುಗಡೆಯನ್ನೂ, ಸಾರ್ಥಕತೆಯ ಕ್ಷಣಗಳನ್ನೂ, ಹೊಸ ಭರವಸೆಯನ್ನೂ ಪಡೆಯಲು ಬಯಸುವುದಷ್ಟೇ ಅವುಗಳ ಆಚರಣೆಯ ಹಿಂದಿರುವ ಅರ್ಥ. ಬರೀ ಹೊಸ ವರ್ಷದ ಆಚರಣೆ ಅಲ್ಲ ಎಲ್ಲ ಹಬ್ಬ, ದಿನಗಳು, ಜಾತ್ರೆ, ಉತ್ಸವಗಳ ಉದ್ದೇಶವೂ ಅದುವೇ ಅಂಬೋದು ನನ್ನ ಅನಿಸಿಕೆ. ಇಷ್ಟಕ್ಕೂ ಅಖಂಡವಾದ ಅನಂತವಾದ ಕಾಲವನ್ನು ನಮ್ಮ ಅನುಕೂಲಕ್ಕಂತನೇ ತಾನೇ ನಾವು ವಿಭಾಗಿಸಿ ವರುಷ, ತಿಂಗಳು, ಮಾಸ, ತಿಥಿ, ವಾರ ಎಂದೆಲ್ಲ ಮಾಡಿಕೊಂಡಿದ್ದು.ನಿನ್ನೆಯಷ್ಟೇ ಎಲ್ಲಿಯೋ ಓದುತ್ತಿದ್ದೆ.. ಇಥಿಯೋಪಿಯಾ ದೇಶದ ಕ್ಯಾಲೆಂಡರ್, ಅಲ್ಲಿಯ ಹೊಸ ವರುಷ ಎಲ್ಲ ಬೇರೆಯೇ ಅಂತೆ. ಅಲ್ಲೀಗ 2018 ನಡೆದಿದೆಯಂತೆ. ಅದಕ್ಕೇ ಅಲ್ಲವೇ ‘ದೇಶ ಕಾಲ ವಿಭಾಗ ಮನದ ರಾಜ್ಯದೊಳಿರದು’ ಅಂತ ನಮ್ಮ ಗುಂಡಪ್ಪನವರು ಎಂದೋ ಹೇಳಿದ್ದು?!

ಹೊಸ ವರುಷ ಅಂದ ಮ್ಯಾಲೆ ಎಲ್ಲರ ಮನೆಯಾಗೂ ಹೊಸ ಕ್ಯಾಲೆಂಡರ್ ಹಾರಾಡಲಿಕ್ಕೇ ಬೇಕು . ಈ ಕ್ಯಾಲೆಂಡರ್ ನ ಇತಿಹಾಸ ಅಥವಾ ಕೆಲವು ಜನರ ಈ ಜನವರಿ ಫೆಬ್ರವರಿ ಅಥವಾ ಹಿಂದೂ ಪಂಚಾಂಗ ಚೈತ್ರ- ವೈಶಾಖಗಳ ದ್ವಂದ್ವ ಯುದ್ಧ ಇತ್ಯಾದಿಗಳ ಬಗ್ಗೆ ನಾ ಇಲ್ಲೇ ಮಾತನಾಡಲಿಕ್ಕೆ ಹೋಗೋದಿಲ್ಲ ಖರೇ ಹೇಳಬೇಕೆಂದರೆ ನಾವು ಸಣ್ಣವರಿದ್ದಾಗ ಅಂಕಲಪಿ ಹಿಂದೆ ಇದ್ದ ಚೈತ್ರ- ವೈಶಾಖ- ವಸಂತ ಋತು ಹಾಗೂ ಜನವರಿ, ಫೆಬ್ರವರಿ, ಮಾರ್ಚ್, ಏಪ್ರಿಲ್ ಅಂತ ಎರಡನ್ನೂ. ಅಷ್ಟೇ ಶ್ರದ್ಧೆಯಿಂದ ಕಣ್ಮುಚ್ಚಿ ಕೈ ಕಟ್ಟಿ ನಿಂತು ಉರು ಹೊಡೆದಿದ್ದೆವು.. ಕೆಲವೊಮ್ಮೆ ಹಿಂದೆ ಮುಂದೆ ವಾಲಾಡುತ್ತಾ. ಜೋಡಿಗೆ ಆ ಜನವರಿ, ಫೆಬ್ರವರಿಗಳ ಸ್ಪೆಲಿಂಗ್ ಕಲಿಯಲಿಕ್ಕೂ ಪರಿಪಾಟಲು ಪಟ್ಟಿದ್ದು ಸುಳ್ಳಲ್ಲ. ಯಾಕೆಂದರೆ ಇಂಗ್ಲೀಷ್ ನಮ್ಮ ಕನ್ನಡದ್ಹಂಗ ಅಲ್ರಿ ಬಾಯಲ್ಲಿ ಅನ್ನೋದೇ ಬೇರೆ, ಅಲ್ಲಿ ಸ್ಪೆಲಿಂಗ್ ಬರೆಯುವುದೇ ಬೇರೆ. ಈಗ ಉದಾಹರಣೆಗೆ ನೋಡ್ರಿ ಜನವರಿಯನ್ನು ಬರೆಯುವುದು JANUARY ಅಂತ ಇಲ್ಲೇ U ಎಲ್ಲಿಂದ ಬಂತು ಅಂತ ತಲಿ ಕೆಡತಿತ್ತರೀ.. ಈಗಲೂ ಅಷ್ಟೇ ಎಷ್ಟೋ ಶಬ್ದಗಳನ್ನು ಉಚ್ಚಾರ ಮಾಡೂದ್ಹೆಂಗ ಅಂತ ಚಿಂತೀರಿ. ಏನs ಇರಲೀರಿ ನಮಗ ದಿನದ ಉಪಯೋಗಕ್ಕೆ ಸರಳ ಅನ್ನಸೂವು ಈ ಜನವರಿ ಫೆಬ್ರವರಿನೇ. ಚೈತ್ರ ವೈಶಾಖಗಳು ಸ್ವಲ್ಪ ಕಠಿಣ ಅನ್ನಿಸಿ ಬಿಡತಾವ್ರೀ. ವೈಶಾಖ ಶುದ್ಧ ದಶಮಿ, ಭಾದ್ರಪದ ಶುಕ್ಲ ಚೌತಿ, ಶ್ರಾವಣ ಬಹಳ ಅಷ್ಟಮಿ ಹಿಂಗೆಲ್ಲಾ. ಆ ಕೃಷ್ಣ ಪಕ್ಷ ಶುಕ್ಲ ಪಕ್ಷಗಳು, ಶುದ್ಧ ಬಹುಳಗಳು ಸ್ವಲ್ಪ ಕನ್ಫ್ಯೂಸ್ ಆಗಿಬಿಡತಾವ್ರಿ. ಅವು ಸುಮ್ಮ ಮದುವೆ ಮುಂಜವಿಗಳಿಗೆ, ಪೂಜಾ ಪುನಸ್ಕಾರಗಳಿಗೆ, ಲಗ್ನ ಮುಹೂರ್ತಕ್ಕಷ್ಟೇ ಸೀಮಿತವಾಗಿ ಬಿಟ್ಟಾವ. ಹಂಗ ನೋಡಿದ್ರ ಈ ಜನವರಿ ಫೆಬ್ರವರಿಗಳು ದಿನ ಊಟಕ್ಕೆ ಬಳಸುವ ಸ್ಟೀಲ್ ತಟ್ಟೆ ಲೋಟಗಳಾದ್ರ ಈ ಸಂವತ್ಸರೇ, ಅಯನೇ, ಮಾಸೌ, ಪಕ್ಷೇ, ತಿಥೇ, ವಾಸರೌ.. ಎಲ್ಲಾ ಯಾರರೆ ಅತಿಥಿ ಅಭ್ಯಾಗತರು ಬೀಗರು ಬಿಜ್ಜರು ಬಂದಾಗ ಮಾತ್ರ ಹೊರ ತೆಗೆದು ಅವರು ಹೋದ ನಂತರ ಮತ್ತೆ ಕಾಳಜಿಲೆ ಪ್ಯಾಕ್ ಮಾಡಿ ಸ್ವಸ್ಥಾನಕ್ಕೆ ಸೇರಿಸಿಬಿಡುವ ತುಟ್ಟಿ ಡಿನ್ನರ್ ಸೆಟ್ ಗಳ ಗತೆ ಅಂದ್ರ ತಪ್ಪಾಗಲಿಕ್ಕಿಲ್ಲ.

ಆದ್ರೆ ಕೆಲವು ಈ ನಮ್ಮ ಕ್ಯಾಲೆಂಡರ್ ಗಳು ಇರ್ತಾವಲ್ರೀ ‘ ಹೊಂಬಾಳಿ ಬಂಧುಗಳು’, ‘ ಮಹಾಲಕ್ಷ್ಮಿ ದಿನದರ್ಶಿಕೆ’, ‘ಕಾಲ ನಿರ್ಣಯ’ ಇತ್ಯಾದಿ.. ಇವುಗಳು ಮಾಡುವ ಕೆಲಸ ಅನನ್ಯ ನೋಡ್ರಿ ಇವುಗಳೊಳಗ ಜನವರಿ ಫೆಬ್ರವರಿ 1 ರಿಂದ 28,30,31 ದಿನಾಂಕಗಳ ಜೊತೆಗೆ ತಿಥಿ, ನಕ್ಷತ್ರ, ರಾಹುಕಾಲ, ಗುಳಿಕಕಾಲ ಎಲ್ಲಾನೂ ಕೊಟ್ಟಿರ್ತಾರ. ಏನು ಮಾಹಿತಿ ಬೇಕಂದ್ರೂ ತಟ್ಟಂತ ಸಿಕ್ಕಿಬಿಡುತ್ತದ. ಅಡುಗೆಮನೆ ಗ್ವಾಡಿಗೆ ಇಂಥದೊಂದು ಕ್ಯಾಲೆಂಡರ್ ಬೇಕೇ ಬೇಕು ನೋಡ್ರಿ. ರಥ, ಜಾತ್ರಿ, ತೇರು ಏಕಾದಶಿ- ದ್ವಾದಶಿಗಳು, ಹುಣ್ಣಿಮೆ- ಅಮಾವಾಸ್ಯೆಗಳು, ಹಬ್ಬ- ಹರಿದಿನಗಳು, ಆರಾಧನೆ- ವರ್ಧಂತಿಗಳು, ಸಂಕಷ್ಟಿ, ಚಂದ್ರೋದಯ- ಸೂರ್ಯೋದಯಗಳು ಇವುಗಳ ಮಾಹಿತಿ ಗೃಹಿಣಿ ಆದಾಕಿಗೆ ಅವಶ್ಯ ಇರಬೇಕಲ್ರಿ.ಅದಕ್ಕ ಅಡುಗೆಮನ್ಯಾಗೊಂದು ಕ್ಯಾಲೆಂಡರ್ ಇದ್ರ ಅದರ ಮೇಲೆ ಕಣ್ಣು ಹಾಯಕೋತ ಇರ್ತದ. ಇರಲಿಕ್ಕಂದ್ರ ಏಕಾದಶಿ ಮುಂಜಾನೆ ಘಂ ಅಂತ ಉಳ್ಳಾಗಡ್ಡಿ ಉಪ್ಪಿಟ್ಟು ತಯಾರಾಗಿ ಬಿಡುತದ. ಮರುದಿನದ ಹುಣ್ಣಿಮೆಗೆ ಕಾಯಿ ತರೋದು ಮರೆತು ಹೋಗ್ತದ. ಕುಲ ದೇವರ ತೇರು, ಮನೆಯ ಹೆಣ್ಣು ದೇವತೆಯ ಕಾರ್ತಿಕೋತ್ಸವ, ತೆಪ್ಪೋತ್ಸವ ಇವುಗಳೆಲ್ಲ ನೆನಪೇ ಉಳಿಯುವುದಿಲ್ಲ.

ಈ ಕ್ಯಾಲೆಂಡರ್ಗಳ ಬಹುಪಯೋಗ ನಿಮಗೂ ಗೊತ್ತೇ ಇರುತದ್ರಿ. ಅವಸರಕ್ಕ ಬೇಕಂದಾಗ ದಾರದ ಸಮೇತ ಸೂಜಿ, ಟಾಚನಿಗಳು ಸಿಗುವುದು ಇದೇ ಕ್ಯಾಲೆಂಡರಿನಾಗೇರಿ. ತಿಂಗಳ ವರವಿ ಹಾಲು -ಮೊಸರಿನ ಲೆಕ್ಕ, ಇಸ್ತ್ರಿ ಅವನಿಗೆ ಕೊಟ್ಟ ಬಟ್ಟೆಗಳು, ಅವನು ವಾಪಸ್ ಕೊಡಬೇಕಾದ ಚಿಲ್ಲರೆಯ ಲೆಕ್ಕ, ಯಾವುದೋ ಬ್ಲಡ್ ಟೆಸ್ಟ್, ದಂತ ವೈದ್ಯರ ಅಪಾಯಿಂಟ್ಮೆಂಟ್ ದಿನಾಂಕ, ಮಕ್ಕಳ ಶಾಲೆಯ ಪೇರೆಂಟ್ -ಮೀಟಿಂಗ್, ಪಿಕ್ನಿಕ್- ಗ್ಯಾದರಿಂಗು ಇವುಗಳ ದಿನಾಂಕಗಳು, ಯಾರದೋ ಮನೆಯ ಮದುವೆಯ ರಿಸೆಪ್ಶನ್, ಬಂಧುಗಳೊಬ್ಬರ ಸೊಸೆಯ ಶ್ರೀಮಂತದೂಟಕ್ಕೆ ಹೋಗಬೇಕಾಗಿರುವ ದಿನಾಂಕಗಳು, ಕಿರಾಣಿ ಖರೀದಿಸಿದ ದಿನ ಮತ್ತು ಅದರ ಟೋಟಲ್ ರೊಕ್ಕ ( ಯಾಕಂದ್ರೆ ಯಜಮಾನರು ಯಾವಾಗ ಕಿರಾಣಿ ತರಲು ಕರೆದರೂ “ಮನ್ನೀನ ತಂದಿದ್ದೆಲ್ಲಾ 20,000 ಕಿರಾಣಿ ಅಂತಿರ್ತಾರ. ಅವರಿಗೆ ಸಾಕ್ಷಿ ಸಮೇತ ಆ ಹಿಂದಿನ ಡೇಟ್, ದುಡ್ಡು ತೋರಿಸಬೇಕಲ್ರೀ ಅದಕ್ಕ) ಇನ್ನ ಕೆಲಸದ ಗದ್ದಲದಾಗ ಮರೆತು ಬಿಡಬಾರದಂತ ಮನೆಯವರ ಆಫೀಸಿನ ಟೂರಿನ ದಿನಾಂಕ, ತಿಂಗಳ ಮೊದಲೇ ತಮ್ಮ ಆಗಮನದ ಡೇಟ್ ತಿಳಿಸಿದ ಅತಿಥಿಗಳ ಆಗಮನದ ದಿನಾಂಕ, ಅವರ ಟ್ರೈನು, ಬೋಗಿ ನಂಬರ್, ಫ್ಲೈಟು, arrival time, ಟರ್ಮಿನಲ್ ಇತ್ಯಾದಿಗಳ ದಾಖಲಾತಿ ಎಲ್ಲಾ ಇಲ್ಲೇ ಈ ತೂಗಾಡೋ ಕ್ಯಾಲೆಂಡರಿನಲ್ಲೇ. ನಾದಿನಿಯ ಗಂಡ, ತಮ್ಮನ ಹೆಂಡತಿ, ಅಕ್ಕನ ಗಂಡ ಹೀಗೆ ಬಹಳ ಪ್ರಮುಖರಾದವರ ಹುಟ್ಟುಹಬ್ಬ, ಆನಿವರ್ಸರಿ ಮರೆತು ಬಿಡಬಹುದಾದ ಸಾಧ್ಯತೆಗಳೇ ಹೆಚ್ಚು. ಆ ಪ್ರಮಾದಗಳು ಆಗದಂಗ ತಪ್ಪಿಸಲಿಕ್ಕೆ ಈ ಕ್ಯಾಲೆಂಡರ್ ನಾಗ ಮಾರ್ಕ್ ಮಾಡಿ ಇಟ್ಟುಬಿಟ್ಟರ ಆಯ್ತ್ರಿ . ಇನ್ನ ಮನೆ ಕೆಲಸದಕಿ ತಗೊಂಡ ರಜಾ ದಿನಗಳು, ಅಕಿ ಅಡ್ವಾನ್ಸ್ ಆಗಿ ಇಸ್ಕೊಳ್ಳೋ ನೂರು ಇನ್ನೂರು ರೂಪಾಯಿಗಳ ಲೆಕ್ಕಕ್ಕೂ ಈ ಕ್ಯಾಲೆಂಡರ್ ಬೇಕ್ರಿ. ಇಲ್ಲ ಅಂದ್ರ ತಿಂಗಳದಾಗ ನಾಲ್ಕು ದಿನ ರಜಾ ಮಾಡಿ ಅಂತ ನಾನು, ಇಲ್ಲ ಎರಡೇ ದಿನ ಅಂತ ಅಕಿ ಹಾಕ್ಯಾಡೋದು ನಡೀತಿತ್ರೀ. ಆದ್ರ ಯಾವಾಗ ಈ ಕ್ಯಾಲೆಂಡರ್ನಾಗ ಅವೆಲ್ಲ ದಾಖಲಾಗಲಿಕ್ಕೆ ಶುರು ಆಯ್ತೋ ಆಗ ಇಂಥ ಪ್ರಸಂಗಗಳು ಕಡಿಮೆ ಆದ್ವು ಅನ್ರಿ. ಅಷ್ಟೇ ಅಲ್ರಿ ನಾನಂತೂ ಕೆಲವೊಂದು ಅರ್ಜೆಂಟ್, ಎಮರ್ಜೆನ್ಸಿ ಫೋನ್ ನಂಬರ್ ಗಳನ್ನು ಅದರ ಮೇಲೇ ಗೀಚಿರತೀನ್ರಿ. ಫೆಸಿಲಿಟಿ ಆಫೀಸ್, ಗ್ಯಾಸ್ ಸಿಲಿಂಡರ್ ಏಜೆನ್ಸಿ, ಮಿಕ್ಸಿ ರಿಪೇರಿಯವ, ರದ್ದಿ ಪೇಪರಿನವ, ಹೋಂ ಡೆಲಿವರಿ ಮಾಡುವ ಹತ್ತಿರದ ಕಿರಾಣಿ ಅಂಗಡಿಯವ, ಅರ್ಜಂಟಿಗೊದಗುವ ಆಟೋ ಚಾಲಕ, ಡ್ರೈಕ್ಲೀನಿನವ, ಟೇಲರ್, ಬ್ಯೂಟಿ ಪಾರ್ಲರ್ ದಕಿ.. ಹೀಂಗs ನೂರಾ ಎಂಟು ನಂಬರ್.. ಯಾಕ ನಗಲಿಕ್ಹತ್ತೀರೇನು? ಏಯ್ ನಿಮಗೇನ ಗೊತ್ತರೀ ಯಾವ ಟೈ ಮಿನಾಗ ಯಾರಾರ ನಂಬರ್ ಹರಕತ್ ಆಗಿಬಿಡತಾವ ಅಂತ. ಮೊಬೈಲ್ ನಾಗ ಸೇವ್ ಮಾಡಕೋಬಹುದಲಾ ಅಂತೀರೇನು ಅದರ ಕಥಿನೂ ಹೇಳತೀನಿ ತಡೀರಿ. ಮೊಬೈಲ್ ನಾಗ ನಮಗ ಬೇಕಂದಾಗ ಕೆಂಪು ಗೆರಿನೇ.. ಚಾರ್ಜೇ ಇರಂಗಿಲ್ಲ. ನೂರೆಂಟು ಗೇಮ್ಸ್ ಡೌನ್ಲೋಡ್ ಮಾಡಿಕೊಂಡು ಆಡಿ, U tube, google ಜನ್ಮವನ್ನೆಲ್ಲ ಜಾಲಾಡಿ ಬ್ಯಾಟರಿ ಲೋ ಅಂತ ತೋರಿಸಿದ ಕೂಡಲೇ ಎಲ್ಲಿ ಕೂತಿರತಾರೋ ಅಲ್ಲೇ ಅದನ್ನಿಟ್ಟು ಎದ್ದು ಮತ್ತೊಂದು ಅಪ್ಪನದೋ, ಅಜ್ಜನದೋ ಮೊಬೈಲ್ ಅನ್ವೇಷಣೆಗೆ ಹೊರಡೂದು ನಮ್ಮ ಮಕ್ಕಳ ಹುಟ್ಟು ಗುಣಾರೀ. ಎಷ್ಟರ ಬಯ್ಯರಿ, ತಿಳಿಸಿ ಹೇಳ್ರಿ ಏನು ಉಪಯೋಗ ಇಲ್ಲ ರೀ. ಹಿಂಗಾಗಿ ಮೊದಲು ಮೊಬೈಲ್ ಹುಡುಕುವ ಕೆಲಸ ಶುರು ಮಾಡಬೇಕ್ರಿ. ಸೋಫಾ ಸಂದ್ಯಾಗ, ಡೈನಿಂಗ್ ಟೇಬಲ್ ಚೇರ್ ಮ್ಯಾಲೋ, ಮಡಚಿಡಬೇಕು ಎಂದು ಗುಡ್ಡೆ ಹಾಕಿದ ಒಗೆದ ಬಟ್ಟೆಗಳ ರಾಶಿಯಲ್ಲೋ, ರಜಾಯಿಯ ಸುರುಳಿ, ತಲೆದಿಂಬಿನ ಕವರ್ ನಲ್ಲೋ, ಬಚ್ಚಲು ಮನೆಯ ಸಿಂಕಿನ ಬಳಿಯೋ ಎಲ್ಲಿ ಬೇಕಾದರೂ ಪರದೇಶಿಗತೆ ಅದು ಬಿದ್ದಿರಬಹುದಾದ ಸಾಧ್ಯತೆಗಳು ಹೆಚ್ಚರೀ. ಯಾರನ್ನೇ ಕೇಳ್ರಿ ‘ನಾ ನೋಡಿಲ್ಲ.. ಚಿನ್ನು ತಗೊಂಡಿದ್ಲು’, ‘ನಂಗೊತ್ತಿಲ್ಲ.. ಅಣ್ಣಾ ಪಬ್ಜಿ ಆಡಲಿ ಕ್ಹತ್ತಿದ್ದ’, ‘ಇಲ್ಲೇ ಚಾರ್ಜಿಗಿತ್ತು.. ಆಗಳೇ ನೋಡಿದ್ದೆ.’. ಇಂಥವೇ ಉತ್ತರಗಳು. ರಿಂಗ್ ಮಾಡಿದ್ರೆ ಪಾಪ ಗುಟುಕು ಜೀವ ಹಿಡಿದ ಅದಕ್ಕ ರಿಂಗ್ ಆಗುವ ತಾಕತ್ತೂ ಇರುವುದಿಲ್ಲ. ಕೆಲವೊಮ್ಮೆ ಅಂತೂ ನಾನು ಗೇಮ್ ಆಡಿದ್ರ ಬೈತೀನಿ ಅಂತ ಸೈಲೆಂಟ್ ಬೇರೆ ಮಾಡಿರತಾರ. ಹಿಂಗಂತ ಪಾಸ್ವರ್ಡ್ ಹಾಕಿಟ್ರೆ ಆ ನಂಬರು ಪ್ಯಾಟರ್ನ್ ಏನಿತ್ತು ಅಂತ ನಂಗs ನೆನಪಿರುವುದಿಲ್ಲರೀ. ಇನ್ನ ಯಾವುದರ ಡೈರಿನಾಗ ಬರೆದಿಟ್ಟುಕೊಂಡಿದ್ದರೂ ಆ ಡೈರಿ ಹುಡುಕಲಿಕ್ಕೆ ತಾಸು ಬೇಕು. ಯಾಕಂದ್ರ ಮಗಳು ಒಮ್ಮೆ ಅದನ್ನ ತನ್ನ rough note book ಮಾಡಿಕೊಂಡಿರತಾಳ. ಇನ್ನೊಮ್ಮೆ ಮಗ ರಾಯ ಯಾವುದೋ ಹಾಳಿನಾಗ ಯಾರಿಗೋ ಅಡ್ರೆಸ್ ಬರೀಲಿಕ್ಕೆ ಅಂತ ಅದನ್ನ ಪೇಪರ್ ಪ್ಯಾಡ್ ಗತೆ use ಮಾಡಿ ಎಲ್ಲೋ ಸೇರಿ ಸಿಟ್ಟು ಹೋಗಿರುತ್ತಾನೆ. ವೀಕೆಂಡ್ಗೆ ಮನೆಗೆ ಬಂದಿದ್ದ ನಾದಿನಿ ಮಗಳು ಅದನ್ನು ಡ್ರಾಯಿಂಗ್ ಬುಕ್ ಮಾಡಿಕೊಂಡು ಚಿತ್ರ ಗೀಚಿರತಾಳ. ಟೀಪಾಯ್ ಮೇಲಿದ್ರ ಯಾರೋ ಅದನ್ನು ಬಿಸಿ ಚಹಾ ಕಪ್ ಇಡಲಿಕ್ಕೆ ಕೋಸ್ಟರ್ ಗತೆ ಸಹ ಬಳಸಿರತಾರ. ಹೀಂಗಾಗಿ ಇವ್ಯಾವುದರ ಉಸಾಬರಿನೇ ಬ್ಯಾಡ ಅಂತ ‘ಅನ್ಯಥಾ ಶರಣಂ ನಾಸ್ತಿ.. ತ್ವಮೇವ ಶರಣಂ ಮಮ’ ಅಂತ ಈ ಕ್ಯಾಲೆಂಡರಿನ ಮೊರೆ ಹೋಗುವುದೊಂದೇ ದಾರಿ. ನಂಬಿದವರ ಕೈಬಿಡಲಾರದ ದೊಡ್ಡ ಗುಣ ಈ ನಮ್ಮ ಅಡಗಿಮನಿ ಕ್ಯಾಲೆಂಡರಿಗೆ ಅದರೀ.
ಡಿಸೆಂಬರ್ ತಿಂಗಳು ಬಂತಂದ್ರ ಈ ಕ್ಯಾಲೆಂಡರುಗಳ ವ್ಯಾಪಾರದ ಭರಾಟೆ ನೋಡಬೇಕ್ರಿ. ಎಲ್ಲಾ ಸ್ಟೇಷನರಿ ಹಾಗೂ ಪುಸ್ತಕ ಅಂಗಡಿಗಳೊಳಗ ನಾನಾ ನಮೂನಿ ಹೊಚ್ಚ ಹೊಸ ಕ್ಯಾಲೆಂಡರುಗಳು ಮನೆಮನೆಯ ಗೋಡೆಯನ್ನಲಂಕರಿಸಲು ಸಜ್ಜಾಗಿ ಕೂತಿರತಾವ. ವೆಂಕಪ್ಪ, ಹನುಮಪ್ಪ, ಶಿವ, ನರಸಿಂಹ, ಲಕ್ಷ್ಮಿ ಇತ್ಯಾದಿ ದೇವತೆಗಳ ಚಂದದ ಕ್ಯಾಲೆಂಡರ್ ಗಳು. ನಮ್ಮ ಬಾಲ್ಯಕಾಲದ ಎಲ್ಲಾ ಮನೆಯ ಪಡಸಾಲೆಗಳಲ್ಲಿ ಎಲ್ಲಾ ಪ್ರಮುಖ ದೇವತೆ ದೇವತೆಗಳು ಹಿಂಗ ಕ್ಯಾಲೆಂಡರಿನಾಗ ಜೋಕಾಲಿ ಆಡುತ್ತಿದ್ದರು. ನಾವು ಹೊರಹೋಗಲು ಚಪ್ಪಲಿ ಮೆಟ್ಟುವುದಕ್ಕಿಂತ ಮೊದಲು ತಪ್ಪದೇ ಈ ಜೀಕುವ ದೇವರಿಗೆ ಕೈಮುಗಿದೇ ಹೋಗುತ್ತಿದ್ವಿ. ಕೈ ಮುಗಿದೀದ್ದರೂ ಕಡೀಕೆ ಕಣ್ರೆಪ್ಪೆ ಮುಚ್ಚಿ ತೆಗೆದಾದರೂ ಸಾಂಕೇತಿಕ ನಮಸ್ಕಾರ ಸಲ್ಲಿಸಿಯೇ ಹೊರಗಡಿ ಇಡುತ್ತಿದ್ದು. ಎಲ್ಲ ದೇವಾನುದೇವತೆಗಳ ರೂಪ, ಮೈಬಣ್ಣ, ಅವರ ಆರು-ಮೂರು- ನಾಲ್ಕು ತಲೆಗಳು, ಚತುರ್ ಷಡ್ ಭುಜಗಳು,ಶಂಖ- ಚಕ್ರ- ಗದಾ- ತ್ರಿಶೂಲಾದಿ ಆಯುಧಗಳು, ಗರುಡ -ನಂದಿ- ನವಿಲು -ಇಲಿ ಇತ್ಯಾದಿ ಅವರ ಸ್ಪೆಸಿಫಿಕ್ ಆದ ವಾಹನಗಳು, ಅವರು ನುಡಿಸುವ ಕೊಳಲು, ವೀಣೆ ಇತ್ಯಾದಿ ವಾದ್ಯಗಳು,ಆಭರಣಗಳು, ಉಡುಗೆತೊಡುಗೆಗಳು ನಮ್ಮ ಅರಿವಿನ ವಲಯಕ್ಕೆ ತಲುಪಿದ್ದೇ ಈ ಕ್ಯಾಲೆಂಡರುಗಳಿಂದ. ಒಂದರ್ಥದಲ್ಲಿ ದೇವ ದರುಶನ ಮಾಡಿಸಿದ ಗುರು ಸ್ಥಾನ ಸಲ್ಲಬೇಕಿವಕ್ಕೆ. ಎಷ್ಟೋ ಚೆಂದದ ಕ್ಯಾಲೆಂಡರ್ ಗಳು ಕಟ್ ಹಾಕಿಸಿಕೊಂಡು ದೇವರ ಫೋಟೋ ಆಗಿ ಸೀದಾ ದೇವರ ಮನೆಗೆ ಬಡ್ತಿ ಪಡೆಯುತ್ತಿದ್ದವು. ಈಗಲೂ ನನ್ನ ಅಡುಗೆ ಮನೆಯಲ್ಲಿ ವಿರಾಜಮಾನವಾಗಿರುವ 2014ನೇ ಇಸ್ವಿಯ, ಬರ್ಮೀಂಗ್ ಹ್ಯಾಮಿನ ದೇವಸ್ಥಾನದ ಕ್ಯಾಲೆಂಡರಿನ ವೆಂಕಪ್ಪನ ಪಾದಸ್ಪರ್ಶದಿಂದಲೇ ನಮ್ಮ ದಿನಚರಿ ಆರಂಭ ಆಗುತ್ತದೆ. ಯಾಕಂದ್ರ ನಮ್ಮ ಕುಲದೈವರೀ ವೆಂಕಪ್ಪ. ನಾವೂ ಅವನ ಒಕ್ಕಲದವರೇ.. ಅಷ್ಟೇ ಅಲ್ಲ ಬಹಳಷ್ಟು ಸಾಮ್ಯ ಅವರೀ ನಮಗೂ ಅವಗೂ. ನಾವು ಎಲ್ಲರs ಹೊರಗೆ ಹೊಂಟ್ರ ಅವನ ಹಂಗ ಸಿರಿ -ಗರುಡ- ಶೇಷ- ವಾಯು- ಬ್ರಹ್ಮಾದಿಗಳ ಸುರವರ ಪರಿವಾರ ಸಮೇತ ಹೊಂಡಿತೀವ್ರಿ. ಕನಿಷ್ಠ ಪಕ್ಷ ಎಂಟು 10 ಮಂದಿ ಅಂತೂ ಇರಬೇಕು. ಹಿಂಗಾಗಿ ಖರೆ  ಹೇಳ್ತಿನ್ರಿ ಮಂದಿ ನಮ್ಮನ್ನು ತಮ್ಮ ಮನೆಗೆ ಛಾಕ್ಕ ಸಹಿತ ಕರೀಲಿಕ್ಕೆ ಅಂಜತಾರ್ರೀ. ಮತ್ತ ಹತ್ತಾರು ಮೂಲಗಳಿಂದ ಸಾಕಷ್ಟು ಬೇಕಾದಷ್ಟು ಆದಾಯ ಇದ್ದರೂ ವೆಂಕಪ್ಪ ಸದಾ ಸಾಲಗಾರನೇ. ನಾವೂ ಹಂಗs ಆದಾಯದ ಸ್ರೋತ್ರಗಳೆಷ್ಟೇ ಇರಲಿ ನಮ್ಮ ಕ್ರೆಡಿಟ್ ಮುಗಿಯೋದೇ ಇಲ್ರೀ , ಹೋಂ ಲೋನ್, ಕಾರ್ ಲೋನ್, ಪರ್ಸನಲ್ ಲೋನ್, ಕ್ರೆಡಿಟ್ ಕಾರ್ಡ್ ಲೋನ್ ಎಷ್ಟೆಷ್ಟು ಪ್ರಕಾರದ ಲೋನ್ ಗಳು ಅವನೋ ಅಷ್ಟೆಲ್ಲಾ ತರ ಲೋನ್ಗಾರರು ನಾವು. ಇರಲಿ ಬಿಡ್ರಿ ವಿಷಯ ಎಲ್ಲಿಂದೆಲ್ಲೋ  ಹೊಂಟತು ಕ್ಯಾಲೆಂಡರ್ ಬಿಟ್ಟು.
ಚಂದ ಚಂದ ನೆಯ ನೀಲಿ ಆಗಸ, ನೀಲಿ ಕಡಲು, ಬೆಟ್ಟ,ಹಸಿರು ವನಗಳು, ಬಣ್ಣಬಣ್ಣದ ಹೂಗಳಂಥ ನಿಸರ್ಗ ಸೌಂದರ್ಯದ ಕ್ಯಾಲೆಂಡರ್ ಗಳು, ಪ್ರಾಣಿ-ಪಕ್ಷಿಗಳ ಕ್ಯಾಲೆಂಡರ್ ಗಳು, ಮುದ್ದು ಮುದ್ದಾದ ಪುಟ್ಟ ಮಕ್ಕಳ ಕ್ಯಾಲೆಂಡರ್ ಗಳು, ರವಿವರ್ಮನ ಪೇಂಟಿಂಗ್ ಗಳ ಚಿತ್ರವಿರುವ ಕ್ಯಾಲೆಂಡರ್ ಗಳು, ಮೈಸೂರ ಅರಮನೆ, ತಾಜ್ಮಹಲ್, ಗೋಲ್ ಗುಂಬಜ್, ಹಂಪಿಯ ಕಲ್ಲಿನ ರಥವಿರುವಂತಹ ಐತಿಹಾಸಿಕ ಸ್ಮಾರಕಗಳ ಕ್ಯಾಲೆಂಡರ್ ಗಳು, ಸ್ವಾತಂತ್ರ್ಯ ಯೋಧರ, ಸಾಹಿತಿಗಳ, ಕವಿಗಳ ಕ್ಯಾಲೆಂಡರ್ ಗಳು, ಸಿನಿಮಾ ನಟ- ನಟಿಯರ ಕ್ಯಾಲೆಂಡರ್ ಗಳು, ತುಂಡುಡುಗೆಯಲ್ಲಿ ದೇಹಸಿರಿ ಪ್ರದರ್ಶಿಸುವ ರೂಪದರ್ಶಿಗಳ ಮಾದಕ ಕ್ಯಾಲೆಂಡರ್ ಗಳು ಓಹ್! ಎಷ್ಟೆಲ್ಲಾ ವೈವಿಧ್ಯಮಯ.. ಎಷ್ಟೋ ನಮಗೆ ಪ್ರಿಯವಾದ ನಟ ನಟಿಯರ, ಧೀಮಂತ ವ್ಯಕ್ತಿಗಳ, ನಿಸರ್ಗ ಚಿತ್ರಗಳ ಕ್ಯಾಲೆಂಡರ್ ಅನ್ನು ಪುಸ್ತಕ- ನೋಟ್ಬುಕ್ಕುಗಳಿಗೆ ಕವರ್ ಹಾಕಲು ಉಪಯೋಗಿಸಿದ್ದಿದೆ. ಬರೀ ಗೋಡೆಗೆ ತೂಗು ಹಾಕುವ ಕ್ಯಾಲೆಂಡರ್ಗಳಷ್ಟೇ ಅಲ್ಲ ಟೇಬಲ್ ಮೇಲೆ ಇಡಬಹುದಾದ ಕ್ಯಾಲೆಂಡರ್ ಗಳು ಇರ್ತಾವ. ಎಷ್ಟೋ ಬ್ಯಾಂಕು, ಎಲ್ಐಸಿ, ಪ್ರೈವೇಟ್ ಕಂಪನಿಗಳು ತಮ್ಮದೇ ಲೇಬಲ್ ನಡಿಯಲ್ಲಿ ಕ್ಯಾಲೆಂಡರ್ ಮಾಡಿಸುವುದು ಸರ್ವೇಸಾಮಾನ್ಯ. ಇನ್ನು ಕೆಲವೊಬ್ಬ ಸ್ಥಿತಿವಂತರು ತಮ್ಮ ಮದುವೆಯ, ಮಕ್ಕಳ ಚಿತ್ರಗಳನ್ನು ಒಳಗೊಂಡ ತಮ್ಮದೇ ಆದ ಕ್ಯಾಲೆಂಡರ್ ಮಾಡಿಸಿಕೊಂಡು ತಮ್ಮ ಬಂಗಲೆ ಅಂಥ ಮನೆಯ ಲಿವಿಂಗ್ ರೂಮ್ನಲ್ಲೋ, ಬೆಡ್ರೂಮ್ ನಲ್ಲೋ ಹಾಕಿರತಾರ.

ಮಜಾ ಅಂದ್ರ ಕ್ಯಾಲೆಂಡರಿನ ಮುಂಭಾಗದಷ್ಟೇ ಹಿಂಭಾಗವೂ ಅತ್ಯಂತ ಆಸಕ್ತಿದಾಯಕ ವಿಷಯಗಳನ್ನು ಒಳಗೊಂಡಿರುತದ ಅನ್ನೋದು ನಿಮಗೂ ಗೊತ್ತೇ ಇರುತ್ತದ. ರಾಶಿ ಭವಿಷ್ಯ, ತಲೆನೋವಿನಿಂದ ಮೂಲವ್ಯಾಧಿ ತನಕ ಎಲ್ಲಾ ಜಡ್ಡುಗಳಿಗೂ ಮನೆಮದ್ದುಗಳು, ಗೋದಿ- ಜೋಳದಾಗ ನುಶಿ ಆದ್ರ, ಬ್ಯಾಳಿ- ಕಾಳಿನಾಗ ಬುರಬುರಿ, ಹಾರೋ ಹುಳ, ರವಾದಾಗ ಬಾಲ ಹುಳ ಆದರೆ ಏನು ಮಾಡಬೇಕು, ತಲ್ಯಾಗ ಹೇನು ಆದ್ರ ಏನು ಮಾಡಬೇಕು, ಮನ್ಯಾಗ ಜೊಂಡಿಗ್ಯಾ,ಹಲ್ಲಿ ಹಾವಳಿಯಾದ್ರ ಏನು ಮಾಡಬೇಕು, ಹೊಲದಾಗಿನ ಯಾವ ಬೆಳೀಗೆ ಯಾವ ಗೊಬ್ಬರ ಹಾಕಬೇಕು, ಮುಖದ ಮೇಲೆ ಮೊಡವಿಗಳಾದ್ರ.. ತಲೆ ಕೂದಲು ಉದುರಿದರ..ತ್ವಚೆ ಕಾಂತಿಹೀನವಾದ್ರಏನೇನೆಲ್ಲ ಮಾಡಬೇಕು?, ಗ್ರಹಣವಾದಾಗ ಏನು ತಿನ್ನಬೇಕು, ಯಾವಾಗ ತಿನ್ನಬೇಕು, ಏನೇನು ದಾನ ಕೊಡಬೇಕು ಎಲ್ಲದರ ವಿವರಣೆ ಇರತದ. ಹಲ್ಲಿ ಮೈಮೇಲೆ ಬಿದ್ರ, ಬೆಕ್ಕು ಅಡ್ಡ ಹೋದ್ರಾ , ನಾಯಿ ಊಳಿಟ್ಟರ, ಮನೆ ಮುಂದೆ ಆಕಳು ಸಗಣಿ ಹಾಕಿ ಹೋಗಿದ್ರ, ಬಲಗಣ್ಣು ಅದುರಿದ್ರ, ಎಡಗಾಲು ತುರಿಸಿದ್ರ.. ಹಿಂಗ ಹತ್ತು ಹಲವಾರು ಶಕುನ ಫಲಗಳು.. ಕನಸಿನಾಗ ತುಂಬಿದ ಕೊಡ ಬಂದ್ರ, ಹಾವು ಬಂದ್ರ, ದೇವರು ಬಂದ್ರ, ಸತ್ತ್ರ, ಎದ್ರ, ಬಿದ್ರ ಅಂತೆಲ್ಲ 108 ಸ್ವಪ್ನ ಫಲಗಳು.. ಮುಂಗಾರು ಹಿಂಗಾರು ಮಳೆ, ನಕ್ಷತ್ರಗಳ ವಿವರಣೆ, ಮಳೆಯ ಸಂಭವನೀಯತೆಗಳು.. ಕೃಷ್ಣಾರ್ಘ್ಯ ಮಂತ್ರ, ಕಾರ್ತಿಕ ಸ್ನಾನದ ಮಂತ್ರ, ನಷ್ಟವಸ್ತು ಸಿಗುವ ಕಾರ್ತವೀರ್ಯಾರ್ಜುನ ಮಂತ್ರ, ಲಗ್ನ ಮುಹೂರ್ತಗಳು, ಪ್ರಯಾಣಕ್ಕೆ ಶುಭ ತಿಥಿ, ಶುಭ ನಕ್ಷತ್ರಗಳ ವಿವರಣೆ , ವಾಸ್ತು ಪುರುಷ ತೇಜಿ ಮಂದಿ ಏನುಂಟು ಏನಿಲ್ಲ ನನಗಂತೂ ಹೊಸ ಕ್ಯಾಲೆಂಡರ್ ಬಂದೊಡನೆ ಅದರ ಹಿಂಪುಟಗಳನ್ನು ತಿರುಗಿಸಿ ನೋಡುವುದೇ ಅಲ್ಲಲ್ಲ ಓದುವುದೇ ಕೆಲಸ. ಈಗೀಗ ಮೊಬೈಲ್ನಾಗೂ ಆಯಾ ವರ್ಷದ ಕ್ಯಾಲೆಂಡರ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಒಂದು ಬಟ್ಟೊತ್ತಿದರೆ ಸಾಕು ಎಲ್ಲ ಮಾಹಿತಿ ಪಡೆಯಬಹುದು. ಆದರೆ ಗ್ವಾಡಿಗೆ ಮಳಿ ಹೊಡೆದು ತೂಗು ಹಾಕಿದ ಆ ಕ್ಯಾಲೆಂಡರ್ ನ ಮಜಾ ಖಂಡಿತ ಅದರಾಗಿಲ್ಲ. ಯಾಕಂದ್ರ ನಾ ಈ ಹಿಂದೆ ಹೇಳಿದ ಸೂಜಿ ಚುಚ್ಚುವುದೇ ಮುಂತಾದ ಯಾವ ಬಹುಪಯೋಗಿ ಕೆಲಸಕ್ಕೂ ಅದು ಬರಂಗಿಲ್ಲ.

ಒಟ್ಟಿನಾಗ ಕ್ಯಾಲೆಂಡರ್ ನಮ್ಮ ನಿಮ್ಮೆಲ್ಲರ ಜೀವನದ ಒಂದು ಅವಿಭಾಜ್ಯ ಅಂಗ ಅನ್ನೂದರಾಗ ಎರಡು ಮಾತಿಲ್ಲ ಕಾಲ ದೇಶ ಯಾವುದರ ಇರಲಿ ಗ್ವಾಡಿ ಮೇಲೆ ಕ್ಯಾಲೆಂಡರ್ ಇರಲಿ ಅಂತ ಹೇಳುತ್ತಾ ನನ್ನ ಹರಟಿಗೆ ಮಂಗಳ ಹಾಡುತೀನಿ.

~ ಗೌರಿಪ್ರಸನ್ನ

ಬಾಬ್ ಎಂಬ  ಡೊಂಕು ಬಾಲದ ನಾಯಕರ ಕಥಾನಕ.

-ಅಮಿತ ರವಿಕಿರಣ್  

 

ಶಾಲೆಯಿಂದ ಮಗಳನ್ನು ಕರೆದುಕೊಂಡು ವಾಪಸ್ ಮನೆಗೆ ಬರುವಾಗ ದೂರದಿಂದಲೇ ಪ್ಯಾಟ್ರಿಕ್ ಮತ್ತು ಬಾಬ್ (BOB) ಕಾಣಿಸಿದರು. ಪ್ರತಿಸಲದಂತೆ ಮಗಳು ನನ್ನ ಕೈ ಬಿಡಿಸಿಕೊಂಡು ಅವರತ್ತ ಓಡಿ ಹೋದಳು. ಪ್ಯಾಟ್ರಿಕ್ ನನ್ನೆಡೆಗೆ ನೋಡುತ್ತಾ ನಿಮ್ಮನ್ನೇ ಕಾಯುತ್ತಿದ್ದೆ, ನೋಡಿ ನಿನ್ನೆ ರಾತ್ರಿಯಿಂದ ಇವ ಊಟವೇ ಮಾಡಿಲ್ಲ ಅನ್ನುತ್ತಾ ಕಿಸೆಯಿಂದ ತಿಂಡಿ ಪೊಟ್ಟಣ ತೆಗೆದು ನನ್ನ ಮಗಳ ಹತ್ತಿರ ಕೊಟ್ಟು "ನೀ ತಿನ್ನಿಸಿ ನೋಡ್ತೀಯ, ಆಡುವ ಗುಂಗಿನಲ್ಲಿ ಸ್ವಲ್ಪ ತಿಂದರೂ ತಿನ್ನಬಹುದು" ಅಂದ. ನನ್ನ ಮಗಳು ನಿಯತಿ ಮತ್ತು ಬಾಬ್ ಒಂದು ಒಣ ಕಟ್ಟಿಗೆಯ ತುಂಡನ್ನು ಹಿಡಿದು ಆಟ ಆಡುತ್ತ ಮಧ್ಯ ಮಧ್ಯ ನಿಯತಿ ಅವನಿಗೆ ತಿಂಡಿ ತಿನ್ನಿಸುತ್ತ ಹದಿನೈದು ನಿಮಿಷದಲ್ಲಿ ಬಾಬ್ ಪೂರ್ತಿ ಪೊಟ್ಟಣ ತಿಂದು ಮುಗಿಸಿದ್ದನ್ನ ನೋಡಿ ಪ್ಯಾಟ್ರಿಕ್ ಮುಖದಲ್ಲಿ ಸಮಾಧಾನದ ನಗು ಹರಡಿತ್ತು. 

ಬಾಬ್ ಮತ್ತು ಪ್ಯಾಟ್ರಿಕ್ ಪರಿಚಯವಾದದ್ದು ೨ ವರುಷಗಳ ಹಿಂದೆ. ಆಗ ನನ್ನ ಮಗಳು ನರ್ಸರಿಯಲ್ಲಿದ್ದಳು, ''ಅಮ್ಮ ನನಗೊಂದು pet ಬೇಕು" ಎಂದು ಗಂಟು ಬಿದ್ದಿದ್ದಳು. ಓಹ್ ಪೆಟ್ಟು ಬೇಕಾ, ಬಾ ನಾನಾ ಹತ್ತಿರ ಡಿಸೈನ್ ಡಿಸೈನ್ ಪೆಟ್ಟುಗಳ ಸಂಗ್ರಹ ಇದೆ, ನನ್ನ ಅಮ್ಮ ನನಗೆ ಕೊಟ್ಟಿದ್ದು, ನಾನು ಈ ವರೆಗೆ ಯಾರಿಗೂ ಕೊಡದೆ ನನ್ನಲ್ಲೇ ಎಲ್ಲಾ ಉಳಿದು ಹೋಗಿವೆ. ಬಾ ಪೆಟ್ಟು ಕೊಡುವೆ ಎಂದು ತಮಾಷೆ ಮಾಡಿ ಆ ಗಳಿಗೆ ನೂಕಿ ಬಿಡುತ್ತಿದ್ದೆ. ಊರಿನಲ್ಲಿ ಆಗಿದ್ದರೆ ಬೆಕ್ಕೋ, ಕೋಳಿಮರಿ, ನಾಯಿಮರಿ ತಂದು ಸಾಕಬಹುದಿತ್ತು. ಆದರೆ ಇಲ್ಲಿ? ನಾಯಿ ಸಾಕುತ್ತಿರುವವರ ಅನುಭವಗಳನ್ನ ಕೇಳಿಯೇ, ಅಯ್ಯೋ! ಇಷ್ಟೊಂದು ಕಷ್ಟವೇ? ಎಂದು ಎನ್ನಿಸಿ ಯಾವತ್ತೂ ಗೋಲ್ಡ್ ಫಿಶ್ ಗಿಂತ ಮೇಲಿನದನ್ನು ಯೋಚಿಸಲಾಗಿರಲಿಲ್ಲ. ಆದರೆ ಆಗಾಗ ಈ ವಿಷಯವಾಗಿ ನನಗೆ ಬೇಸರವೂ ಆಗ್ತಿತ್ತು. ಮಲೆನಾಡ ಸೆರಿಗಿನಲ್ಲಿರುವ ನನ್ನ ತವರಿನಲ್ಲಿ ಸಾಕು ಪ್ರಾಣಿಗಳು ನಮ್ಮ ಜೀವನದ ಒಂದು ಭಾಗವೇ ಆಗಿಬಿಟ್ಟಿದ್ದವು, ನಾವು ಸಾಕಿದ ಪ್ರತೀ ನಾಯಿ, ಬೆಕ್ಕುಗಳ ಸುತ್ತ, ಆಕಳು, ಕರುಗಳ ಜೊತೆ ನಮ್ಮ ನೂರಾರು ನೆನಪುಗಳಿವೆ. ಅಂಥ ಅನುಭವಗಳನ್ನ ನನ್ನ ಮಕ್ಕಳಿಗೆ ಅವರು ಬಯಸಿದ್ದಾಗ್ಯೂ ಕೊಡಲಾಗುತ್ತಿಲ್ಲವಲ್ಲ ಎಂಬ ಸಣ್ಣ ನಿರಾಸೆ ನನಗೆ ಇದ್ದೇ ಇತ್ತು. 

ಆ ದಿನ ಎಂದಿನಂತೆ ನರ್ಸರಿಯಿಂದ ವಾಪಸ್ ಬರುವ ಹೊತ್ತು. ಮೇಪಲ್ ಮರಗಳ ಕೆಳಗೆ ಕುಳಿತು ಅರಳುಗಣ್ಣುಗಳಿಂದ ಆಚೀಚೆ ಬರುವವರನ್ನು ನೋಡುತ್ತಾ ಅವರು ರಸ್ತೆಯ ತುದಿಯಲ್ಲಿ ತಿರುಗಿ ಮರೆಯಾಗುವ ತನಕ ಅವರತ್ತ ಕಣ್ಣು ನೆಟ್ಟು ಮತ್ತೆ ಇನ್ನ್ಯಾರೋ ಬಂದರೆನಿಸಿದರೆ ಪಟ್ಟನೆ ಕತ್ತು ಹೊರಳಿಸಿ ನೋಡುತ್ತಿದ್ದ ಕಪ್ಪು ಬಿಳುಪಿನ ಬಾಬ್ ಯಾಕೋ ನಮ್ಮ ಮನೆಯಲ್ಲಿದ್ದ 'ಬುಧ' ಎಂಬ ನಾಯಿಯನ್ನು ನೆನಪಿಸಿ ಬಿಟ್ಟಿದ್ದ.

 ಮೊದಲ ಭೇಟಿಯಲ್ಲೇ ಬಾಬ್ ನನ್ನ ಮಗಳಿಗೂ ತನ್ನ ಗುಂಗು ಹಿಡಿಸಿದ್ದ. ಮಾತೆತ್ತಿದರೆ ಬಾಬ್ ಅನ್ನುವಷ್ಟು ಸಲಿಗೆ. ಆಗ ಬಾಬ್ ನ ಬಲಗಾಲು ಮುರಿದಿತ್ತು. “ಗುಡ್ಡದಲ್ಲಿ ನಡೆದಾಡಲು ಕರೆದುಕೊಂಡು ಹೋಗಿದ್ದೆ, ಇವ ತನಗೆ ರೆಕ್ಕೆಯೂ ಇದೆ ಅಂದುಕೊಂಡು ಹಾರಾಡಲು ಹೋಗಿ ಬಿದ್ದು ಕಾಲು ಮುರಿದುಕೊಂಡ. ಈಗ ಪ್ಲಾಸ್ಟರ್ ಬಿಚ್ಚಿದ್ದಾರೆ ಆದರೆ ಇನ್ನು ಓಡಾಡಲು ಆಗುತ್ತಿಲ್ಲ. ಅದಕ್ಕೆ ತನ್ನ ಬಳಿ ಯಾರಾದರೂ ಆಡಲಿ, ಮಾತಾಡಲಿ ಅನ್ನುವ ಅತಿಯಾಸೆ ಇವನಿಗೆ, ಶಾಲೆ ಮಕ್ಕಳು ಬರುವ ಹೊತ್ತು ಹೇಗೆ ಗೊತ್ತಾಗುತ್ತದೋ ಗೊತ್ತಿಲ್ಲ, ಒದರಲು ಶುರು ಮಾಡುತ್ತಾನೆ, ಇನ್ನೆರಡು ಘಂಟೆ ಹೊರಗೆ ಇರಬೇಕು ನಾನು,” ಎಂದು ಪಾಟ್ರಿಕ್ ಒಂದೇ ಸಮನೆ ಮಾತಾಡಿದ. ನಾವು ಆ ನೆರಳಲ್ಲೇ ಬಾಬ್ ಪಕ್ಕದಲ್ಲೇ ಕುಳಿತು ಅವನ ಕತ್ತು ಸವರಿ ಮುದ್ದು ಮಾಡಿ ಬಂದಿದ್ದೆವು. ಹೀಗೆ ಆಗಿತ್ತು ನಮ್ಮ ಮೊದಲ ಭೇಟಿ.

ಆ ದಿನದಿಂದ, ಶಾಲೆಯಿಂದ ಬರುವಾಗ ಬಾಬ್ ನೊಂದಿಗೆ ೧೦ ನಿಮಿಷವಾದರೂ ಆಟ ಆಡಿ ಬರುವ ರೂಡಿ ಆಯಿತು. ಬಾಬ್ ಒಬ್ಬ ತುಂಟ ಪೋರನಂತೆ. ಆಟ ಆಡುತ್ತಲೇ ಇರಬೇಕು. ಕಣ್ಣುಗಳು ಸದಾ ನೂರು ವಾಲ್ಟಿನ ಬಲ್ಬಿನಂತೆ ಕುತೂಹಲದಿಂದ ಮಿನುಗುತ್ತಲೇ ಇರುತ್ತವೆ. ಅವನ ಹತ್ತಿರ ಒಂದು ರಬ್ಬರ್ ಚಂಡು, ದಪ್ಪ ಹಗ್ಗದ ತುಂಡು ಇದೆ ಅದವನ ಆಟಿಕೆಗಳು, ಆದರೆ ಅವನಿಗೆ ಈ ಮಕ್ಕಳು ಎಸೆಯುವ ಕಟ್ಟಿಗೆ ತುಂಡು, ಪೇಪರ್ ಚೂರುಗಳೆಂದರೆ ವೀಪರೀತ ಪ್ರೀತಿ. ಹಾಗೆ ದೂರ ಎಸೆದ ಕಟ್ಟಿಗೆಯನ್ನು ಆರಿಸಿ ತಂದು ಹಲ್ಲಿನಿಂದ ಕಚ್ಚಿ ಚೂರು ಚೂರು ಮಾಡಿ ಎಸೆದು ವಿಜಯದ ನಗೆ ಬೀರಿ ಮತ್ತೆ ಮಾಡು ಅಂತ ಪುಟ್ಟ ಮಕ್ಕಳಂತೆ ಗೋಗರೆಯುತ್ತ ನಿಲ್ಲುವ ಹೊತ್ತಿಗೆ ಇತ್ತ ಪ್ಯಾಟ್ರಿಕ್ ಹೆಮ್ಮೆಯಿಂದ ಬಾಬ್ ಬಗ್ಗೆ ಹೇಳಿಕೊಳ್ಳಲು ಶುರು ಮಾಡುತ್ತಾನೆ. ಈ ಜಾಣ ಮಕ್ಕಳ ಅಪ್ಪ ಅಮ್ಮಂದಿರು ಸ್ನೇಹಿತರು ಸಂಭಂದಿಕರೆದುರು ತಮ್ಮ ಮಕ್ಕಳನ್ನು ಹೊಗಳುತ್ತಾರಲ್ಲ ಹಾಗೆ. ಮಧ್ಯ ಮಧ್ಯ ತನ್ನ ಒಂಟಿತನ, ತನ್ನ ಆರೋಗ್ಯದ ಬಗ್ಗೆ ಹೇಳುತ್ತಾನೆ. ಕೆಲವೊಮ್ಮೆ ವಿಷಾದ ಆವರಿಸಿಕೊಳ್ಳುವುದು ನನ್ನ ಅರಿವಿಗೆ ಬರುತ್ತದೆ ಕೂಡ. ಮರು ನಿಮಿಷದಲ್ಲೇ ಬಾಬ್ ನ ಸುದ್ದಿ ಅವನ ಹೊಗಳಿಕೆ ಶುರುವಾಗುತ್ತದೆ. 

“ನನಗೆ ಹೋದವಾರ ಜ್ವರವಿತ್ತು, ಬಾಬ್ ನನ್ನ ಪಕ್ಕವೇ ಮಲಗಿದ್ದ, ನಾ ಕೆಮ್ಮಿದರೂ ಏಳುತ್ತಿದ್ದ ನನಗೆನನ್ನ ಮಕ್ಕಳು ಹತ್ತಿರವಿಲ್ಲದಿದ್ದರೆ ಏನಾಯಿತು ಇವನಿದ್ದಾನಲ್ಲ ನನ್ನ ಕಾಳಜಿ ಮಾಡಲು.” ಹಾಗೆಲ್ಲ ಹೇಳುವಾಗ ನನಗೆ ಪಿಚ್ಚೆನಿಸುತ್ತದೆ. ಮತ್ತೆ ಅವನು ಹೇಳುವುದು ಸುಳ್ಳಲ್ಲ ಎಂಬುದೂ ನನಗೇನು? ಆ ಏರಿಯಾದಲ್ಲಿರುವ ಎಲ್ಲರಿಗು ಗೊತ್ತು.

ನನ್ನ ಮನೆ ಹತ್ತಿರ ಒಂದು old age home ಇದೆ ಅಲ್ಲಿರುವ ಸುಮಾರು ಅಜ್ಜಿಯರಿಗೆ ಬಾಬ್ ಎಂದರೆ ಪ್ರಾಣ, ಅವನಿಗೆ ಒಳ್ಳೊಳ್ಳೆ ಬಿಸ್ಕೆಟ್,  ಕೇಕ್ ತಂದು ಕೊಡುತ್ತಾರೆ ಅದನ್ನು ನಾನೂ ನೋಡಿದ್ದೇನೆ. ಪಾಟ್ರಿಕ್ ಹೇಳುವಂತೆ, ಅಲ್ಲಿ ಒಂದು ಅಜ್ಜಿ ಗಟ್ಟಿಮುಟ್ಟಾಗಿದ್ದಾಳೆ ಬಾಬ್ ಸೀದಾ ಅವಳ ಮೇಲೆ ಮುದ್ದಿನಿಂದ ಜಿಗಿದು ಆಕೆಯ ಹೊಟ್ಟೆ ಮೇಲೆ ಕಾಲಿಟ್ಟು ನಿಂತು ಅವಳ ಹತ್ತಿರ ತಲೆ ನೇವರಿಸಿಕೊಳ್ಳುತ್ತಾನೆ, ವೀಲ್ಚೇರ್ ಮೇಲೆ ಇರುವ ಅಜ್ಜಿಯಾ ಹತ್ತಿರ ಸುಮ್ಮನೆ ನಡೆದು ಹೆಚ್ಚಿನ ಆರ್ಭಟ ವಿಲ್ಲದೆ ವಿಧೇಯ ಮಗುವಿನಂತೆ ಅಕ್ಕ ಪಕ್ಕ ಸುತ್ತುತ್ತಾನೆ. ಇನ್ನೊಬ್ಬರು ಅಜ್ಜಿ ಹಾಸಿಗೆ ಹಿಡಿದಿದ್ದಾರೆ ಅವರ ಹತ್ತಿರ ಹೋಗುವಾಗ ಸೀದಾ ಮಂಚದ ಮೇಲೆ ಕಾಲಿಟ್ಟು ನಿಂತು ಮುದ್ದು ಮಾಡಿಸಿಕೊಂಡು ಬರುತ್ತಾನೆ. ಅದಕ್ಕೆ ಅವರು ಅವನಿಗೆ ತಿಂಡಿ ತರುವುದು. ಇವನಿಗೂ ಇದು ಅಭ್ಯಾಸ ಆಗಿ ಹೋಗಿದೆ. ಯಾರು ಹೇಳಿದ್ದು ಪ್ರಾಣಿಗಳಿಗೆ ಸಭ್ಯತೆ ಇಲ್ಲ ಅಂತ! ನೋಡು ನನ್ನ ಹುಡುಗ ಎಷ್ಟು ಜಾಣ. ಎಂದು ಹೆಮ್ಮೆಯಿಂದ ಬಾಬ್ ಕಡೆಗೆ ನೋಡುತ್ತಾನೆ ಬಾಬ್ ಎಲ್ಲ ಅರ್ಥವಾದವರಂತೆ ಬಾಲ ಅಲ್ಲಾಡಿಸಿ ಕಣ್ಣರಳಿಸುತ್ತಾನೆ. 

ಪ್ರತಿದಿನ ಭೇಟಿ ಬಾಬ್ ನನ್ನು ಭೇಟಿ ಮಾಡುವುದು ಅಭ್ಯಾಸ ಆಗಿಬಿಟ್ಟಿತ್ತು, ಆ ದಿನ ನಿತ್ಯದ ೧೦ ಆಟ ಮುಗಿಸಿ ಇನ್ನೇನು ಹೋರಡಬೇಕು ಅನ್ನುವಷ್ಟರಲ್ಲಿ ಬಾಬ್ ಒಂಥರಾ ವಿಚಿತ್ರ ಧ್ವನಿ ತೆಗೆದು ಕುಸು ಕುಸು ಮಾಡತೊಡಗಿದ, “Oh he is crying…ಒಹ್ god!” ಅವನಿಗೆ ನೀವು ಹೋಗ್ತೇನೆ ಅಂದಿದ್ದು ಇಷ್ಟ ಆಗ್ತಿಲ್ಲ ಅಂದು ನಗಲು ಶುರು ಮಾಡಿದ. ನನಗು ಬಾಬ್ನ ನ ಈ ವಿಚಿತ್ರ ನಡುವಳಿಕೆ ನೋಡಿ ನಗು ಬಂದಿತ್ತು. ಮತ್ತೆ ಆ ದಿನ ಶುರುವಾದ ಈ ಅಳುವ ಕ್ರಮ ಈಗಲೂ ಜಾರಿಯಲ್ಲಿದೆ. 

  ಬಾಬ್ ಸ್ವಲ್ಪ ಚಟುವಟಿಕೆ ಕಡಿಮೆ ಮಾಡಿದರೂ ಸಾಕು, ಪ್ಯಾಟ್ರಿಕ್ ಅವನನ್ನು ಕರೆದುಕೊಂಡು ಟ್ರಿಪ್ ಹೊರಡುತ್ತಾನೆ. ಸಮುದ್ರ ತೀರದಲ್ಲಿ ಕ್ಯಾರಾವ್ಯಾನ್ ನಲ್ಲಿ ತಿಂಗಳುಗಟ್ಟಲೆ ಉಳಿದು ಬರುತ್ತಾರೆ. ಬಂದ ನಂತರ ಬಾಬ್ ನ ವೀರಗಾಥೆಗಳನ್ನು ಕಣ್ಣೆದುರೇ ನಡೆದಂತೆ ಬಣ್ಣಿಸುತ್ತಾನೆ. ಈ ಒಂದು ವರುಷದ lockdown ಸಮಯದಲ್ಲಿ ಇಬ್ಬರು ಅದೆಷ್ಟು ಹಳಹಳಿಸಿದ್ದಾರೋ. ಪ್ಯಾಟ್ರಿಕ್ ನ ಕಡುಹಸಿರು ಬಣ್ಣದ ಕಾರಿನ ಮುಂದಿನ ಸೀಟಿನಲ್ಲಿ ಬಾಬ್ ಗತ್ತು ಗಾಂಭೀರ್ಯದಿಂದ ಕುಳಿತುಕೊಳ್ಳುವುದನ್ನು ನೋಡಿದ್ರೆ ಅವನ ಮೇಲೆ ಮುದ್ದು ಉಕ್ಕುತ್ತದೆ. 

ಮೊನ್ನೆ ಒಂದು ದಿನ ಹೀಗೆ ಮಾತಾಡುತ್ತ “ನನ್ನ ಮಗಳು ನಿಯತಿ ಕೂಡ ಒಂದು ನಾಯಿ ಮರಿ ಬೇಕು ಅಂತಾಳೆ, ಆದ್ರೆ ನಮಗೆ ಧೈರ್ಯ ಇಲ್ಲ, ಅದನ್ನು ನೋಡಿಕೊಳ್ಳಬಲ್ಲೆವೇ? ಅಂತ ಅನಿಸುತ್ತೆ,” ಎಂದೆ. ಅದಕ್ಕೆ ಪಾಟ್ರಿಕ್ ಗಂಭೀರವಾಗಿ “ನಾವು ಮಕ್ಕಳನ್ನು ಬೆಳೆಸುತ್ತೇವೆ, ಕೇಳಿದ್ದೆಲ್ಲ ಕೊಡಿಸುತ್ತೇವೆ , ನಮಗಾದ ನೋವು ಅವರಿಗಾಗಬಾರದು ಅಂತ ದಿನ ರಾತ್ರಿ ಕಷ್ಟಪಟ್ಟು ಕೆಲಸ ಮಾಡ್ತೇವೆ ಒತ್ತಡದಲ್ಲಿ ಬದುಕುತ್ತೇವೆ , ಆದರೆ ಮಕ್ಕಳು ಏನು ಮಾಡ್ತಾರೆ ಹೇಳು ? ಒಂದೇ ನಮ್ಮನ್ನು ಒಂಟಿ ಯಾಗಿ ಬಿಟ್ಟು ತಮ್ಮ ಕನಸುಗಳನ್ನ ಅರಸಿ ಹೊರಡುತ್ತಾರೆ, ಅಥವಾ ಚಟಗಳಿಗೆ ಬಿದ್ದು ದಾರಿ ಹೆಣವಾಗಿ ಹೋಗ್ತಾರೆ.” 

ಬಾಬ್ ನೋಡು ನಾನು ಬರುವುದನ್ನ ಎದುರು ನೋಡ್ತಾನೆ. ಸದಾ ಹಿಂದೆ ಮುಂದೆ ಓಡಾಡ್ತಾನೆ. ಆದರೆ ಎಲ್ಲಿದ್ದಾರೆ ನಾ ಬೆಳೆಸಿದ ನನ್ನ ಮಕ್ಕಳು? ಎಂದು ಬೇಸರಿಸಿದ . 'Dog shelter home' ಗೆ ಹೋಗಿ ಒಂದು ಸಣ್ಣ ಮರಿಯನ್ನು ತಂದುಕೊಡಿ, ಅವಳ ಬಾಲ್ಯ ಇನ್ನು ಸುಂದರವಾಗುತ್ತದೆ ಎಂದು ಹೇಳಿ ಅವನೇನೋ ಸುಮ್ಮನಾದ. 

ಆದರೆ ನನ್ನ ತಲೆಯಲ್ಲಿ ಮಹಾಪೂರ ಹರಿಬಿಟ್ಟ ನಾನು ಬಿಟ್ಟು ಬಂದಿರುವ ನನ್ನ ಅಪ್ಪ ಅಮ್ಮ, ನನ್ನ ಮನೆ, ಮಗಳಾಗಿ ನನಗಿರುವ ಕರ್ತವ್ಯ. ಏನೇನೋ ತಲೆಯಲ್ಲಿ ಸುಳಿದಾಡಿತು. ನಮ್ಮ ತಂದೆ ತಾಯಿ ನಮ್ಮ ಬಗ್ಗೆ ಹೀಗೆ ಅಂದುಕೊಂಡರೆ? ನಾ ಅವರನ್ನು ಪ್ರೀತಿಸುವುದು ಸುಳ್ಳಲ್ಲ ಆದ್ರೆ ಜೊತೆಗಿರಲು ಆಗುವುದಿಲ್ಲ ಎನ್ನುವ ಸತ್ಯ ಅರಗಿಸಿಕೊಳ್ಳಲು ಸ್ವಲ್ಪ ಹೊತ್ತು ಹಿಡಿಯಿತು.  

ಬಾಬ್ ಗೆ ಈಗ ಒಬ್ಬ girlfriend ಆಗಿದ್ದಾಳೆ ಆಕೆಯ ಹೆಸರು violet ಎಂದು. Weekend ಗಳಲ್ಲಿ ಪ್ಯಾಟ್ರಿಕ್ ಅವನನ್ನು ಹೊರಗೆ ಕರೆದುಕೊಂಡು ಹೋಗಿ ವೈಲೆಟ್ ಜೊತೆ ಪಾರ್ಕಿನಲ್ಲಿ ಆಟ ಆಡಲು ಬಿಡುತ್ತಾನೆ. 

ಪ್ಯಾಟ್ರಿಕ್ ಗೆ ಬಾಬ್ ಸಿಕ್ಕ ಘಟನೆಯು ತುಂಬಾ ಮಜವಾಗಿದೆ. ಇಲ್ಲಿ ಕುರಿ ಕಾಯುವ shephard ಗಳು ನಾಯಿಯನ್ನು ಸಾಕುತ್ತಾರೆ. ಆ ನಾಯಿಗಳ ಕೆಲಸ ಕುರಿಗಳನ್ನ ನರಿಗಳಿಂದ ರಕ್ಷಿಸುವುದು ಅವುಗಳು ಹಳ್ಳ ಕೊಳ್ಳಗಳಿಗೆ ಬೀಳದಂತೆ ಎಚ್ಚರಿಸಿ ಅವುಗಳನ್ನ ಒಂದೇ ಕಡೆ ಇರುವಂತೆ ನೋಡಿಕೊಳ್ಳುವುದು. ಈ ನಾಯಿಗಳು ಮರಿ ಹಾಕಿದಾಗ ಒಂದಿಷ್ಟು ವಾರಗಳ ನಂತರ ಅವುಗಳ ಪರೀಕ್ಷೆ ನಡೆಸಲಾಗುತ್ತದಂತೆ, ಮತ್ತು ಆ ದಿನದ ಫಲಿತಾಂಶವೇ ಆ ನಾಯಿಮರಿಯ ಮುಂದಿನ ಭವಿಷ್ಯ ನಿರ್ಧರಿಸುತ್ತದೆ.

ಓಡುವ ಕುರಿ ಮಂದೆಯ ಹಿಂದೆ ಈ ಪುಟ್ಟ ನಾಯಿ ಮರಿಗಳನ್ನು ಓಡಿಸಲಾಗುತ್ತದೆ. ಕೆಲವು ನಾಯಿ ಮರಿಗಳು ಗುಂಪಿನಲ್ಲಿರುವ ದೊಡ್ಡ ನಾಯಿಗಳನ್ನು ಅನುಕರಿಸಿ ಕುರಿಮಂದೆಯ ಹಿಂದೆಯೇ ಜೋರಾಗಿ ಓಡಿ ಬೊಗಳುತ್ತಾ ಸಾಗುತ್ತವೆ ಆದರೆ ಕೆಲವೊಂದು ನಾಯಿಮರಿಗಳು ಮನೆ ಕಡೆಗೆ ಓಡಿ ಬರುತ್ತವಂತೆ. ಹಾಗೆ ಮನೆ ಕಡೆಗೆ ಓಡಿ ಬಂದ ನಾಯಿ ಮರಿಗಳನ್ನು ಶಫರ್ಡ್ ಗಳು ತಮ್ಮ ಜೊತೆಗೆ ಇಟ್ಟುಕೊಳ್ಳುವುದಿಲ್ಲ. ಅವುಗಳನ್ನ ಬೇಗ ಆದಷ್ಟು ಬೇಗ ಸಾಗಿ ಹಾಕಿಬಿಡುತ್ತಾರೆ. ಹಾಗೆ ಕುರಿಗಳ ಹಿಂದೆ ಹೋಗದೆ ಕೂಗುತ್ತಾ ಹೆದರಿ ಮನೆಗೆ ಬಂದು ಮುದುಡಿ ಮಲಗಿದ ಮುದ್ದು ನಾಯಿ ಮರಿ ನಮ್ಮ ಈ ಬಾಬ್ ಅಂದು ಕುರಿಗಳನ್ನು ನೋಡಿಕೊಳ್ಳಕಾಗ್ದಿದ್ರು ಇವತ್ತು ಕ್ಯಾನ್ಸರ್ ಸರ್ವೈವರ್ ಪ್ಯಾಟ್ರಿಕ್ ನ  ಸಂಪೂರ್ಣ ಜವಾಬ್ದಾರಿ ಹೊತ್ತು ಅವನೊಂದಿಗೆ ಸರಿಸಮವಾಗಿ ನಡೆಯುತ್ತಿದ್ದಾನೆ. ಅದಕ್ಕೆ 10 ಪಟ್ಟು ಹೆಚ್ಚು ಪ್ರೀತಿಯೂ ಗಳಿಸುತ್ತಿದ್ದಾನೆ.

ಬಾಬ್ ಈಗಲೂ ನಮಗಾಗಿ ಕಾಯುತ್ತಾನೆ , ನಾವು ಅವನಿಗೆ ಕೊಡುವ ಬರೀ ಕೆಲ ನಿಮಿಷದ ಬದಲು, ಬದುಕಿನ ಅತಿ ಸುಂದರ ಪಾಠ ಹೇಳಿಕೊಟ್ಟ ಜೀವಿ ಬಾಬ್. ಈಗ ಒಂದೈದಾರು ತಿಂಗಳ ಹಿಂದೆ ಮನೆ ಮುಂದೆ ಸಿಕ್ಕ ಬಾಬ್ ಕಣ್ಣುಗಳು ಗಾಜಿನ ಗೋಲಿಯಂತೆ ಹೊಳೆಯುತ್ತಿದ್ದ ಕಣ್ಣುಗಳು, ಖಾಲಿ  ಖಾಲಿ ಅನ್ನಿಸಿದವು. ಹುಷಾರಿಲ್ವಾ? ಬಾಬ್ ಸಪ್ಪಗಿದ್ದಾನೆ ಅಲ್ಲ? ಎಂದು ಕೇಳಿದ್ದೆ ತಡ 'ಬಾಬ್ ಗೆ ಕುರುಡು ಆವರಿಸುತ್ತಿದೆ. ಸ್ವಲ್ಪ ದಿನಗಳಲ್ಲಿ ಅವನಿಗೆ ಏನೇನೂ ಕಾಣುವುದಿಲ್ಲ’  ಎಂದು ಹೇಳಿದ ಮರುಗಳಿಗೆಯೇ, ನಾನಿದ್ದೇನಲ್ಲ ಅವನ ಕಣ್ಣಾಗಿ ನೋಡಿಕೊಳ್ಳುತ್ತೇನೆ ಎಂದು ಹೇಳಿದ ಪ್ಯಾಟ್ರಿಕ್ ದನಿಯಲ್ಲಿ ಮಮಕಾರ ಉಕ್ಕುತ್ತಿತ್ತು. 

ಈಗ ಬಾಬ್ ಪೂರ್ತಿ ದೃಷ್ಟಿ ಕಳೆದುಕೊಂಡಿದ್ದಾನೆ. ಆದರೆ ಪ್ಯಾಟ್ರಿಕ್ ಮಾತ್ರ ಅವನನ್ನು ನಿತ್ಯದಂತೆ ವಾಕಿಂಗ್ ಕರೆದುಕೊಂಡು ಹೋಗುತ್ತಾನೆ. ಆದರೆ ಕಣ್ಣು ಕಾಣದ ಅವನಿಗೆ ಮೂಗು, ಕಿವಿಗಳೇ ದಾರಿದೀಪ. ಎಲ್ಲವನ್ನು ಮೂಸುತ್ತ ಮೂಸುತ್ತ, ಏನಾದರೂ ಸದ್ದು ಕೇಳಿದ ಕೂಡಲೇ ಅವ ಪ್ರತಿಕ್ರಿಯಿಸುತ್ತಾನೆ ಈ ಕಾರಣದಿಂದಲೇ ಅವರ    ವಾಕುಗಳು ಬೇಗನೆ ಮುಗಿಯುವುದೇ ಇಲ್ಲ.

ಎಷ್ಟೋ ಸಲ ಅವನನ್ನು ಮನೆಗೆ ಕರೆದುಕೊಂಡು ಹೋಗುವುದೇ ಪ್ಯಾಟ್ರಿಕ್ ಗೆ ದೊಡ್ಡ ಸವಾಲು.
ತುಂಬ ಕಷ್ಟವೆನಿಸಿದರೆ ಪ್ಯಾಟ್ರಿಕ್ ತನ್ನ ಕ್ಯಾರವಾನ್ ಗೆ ಮರಳಿ ಬಿಡುತ್ತಾನೆ. ವಾಹನಗಳು ಇರದ, ಜನ ಸಂಚಾರವೇ ಇಲ್ಲದ  ಹೊಲಗಳಲ್ಲಿ ಬಾಬ್ ಸ್ವಚ್ಛಂದವಾಗಿ ವಿಹರಿಸಲು ಕಣ್ಣುಗಳು ಬೇಕೆಂದೇನೂ ಇಲ್ಲವಂತೆ. ಇದೆಲ್ಲ ಕೇಳುವಾಗ ನನ್ನ ಕಣ್ಣು ಒದ್ದೆಯಾಗುತ್ತವೆ. ಬಾಬ್ ಮಾತ್ರ ಆ ಕುತೂಹಲದ ನಗು ಇನ್ನೂ ಉಳಿಸಿಕೊಂಡಿದ್ದಾನೆ. ಬಾಬ್ ನನ್ನ ಮತ್ತು ಮಗಳ best friend.

ಆ ನಾಯಿಗೆ ನನ್ನ ದೇಶ, ಭಾಷೆ, ಚರ್ಮದ ಬಣ್ಣ, ನಮ್ಮ ಧಿರಿಸು ಯಾವುದೂ ಮುಖ್ಯವಲ್ಲ. ನಾವು ಅದಕ್ಕೆ ಕೊಡುವ ಪ್ರೀತಿಯಷ್ಟೇ ಬೇಕು. ಅಷ್ಟೇ! ಇನ್ನ್ಯಾವ ನಿರೀಕ್ಷೆಯೂ ಇಲ್ಲ. ಒಮ್ಮೆಯೂ ಅವನಿಗೆ ನಾ ತಿಂಡಿಯನ್ನ ಹಾಕಿಲ್ಲ, ಆಟಿಕೆಯ ಉಡುಗೊರೆಯನ್ನೂ ಕೊಟ್ಟಿಲ್ಲ. ಆದರೂ ಅವ ನಮಗಾಗಿ ಕಾಯುತ್ತಾನೆ, ಆ ಹತ್ತು ನಿಮಿಷ ನಮ್ಮೊಂದಿಗೆ ಕಳೆಯಲು. ಅವನ ಇಚ್ಛೆಯಂತೆ ಪ್ಯಾಟ್ರಿಕ್ ಚಳಿ ಗಾಳಿ ಮಳೆ ಎನ್ನದೆ ಶಾಲೆ ಬಿಡುವ ಹೊತ್ತಿನಲ್ಲಿ ಹೊರಗೆ ಬಂದು ನಿಲ್ಲುತ್ತಾನೆ. ಬಾಬ್ ಪರಿಚಯವಾಗಿ ಈಗ 6 ವರ್ಷಗಳಾದವು.

ಬಾಬ್ ನ ಅಭಿಮಾನಿ ಬಳಗ ತುಂಬಾ ದೊಡ್ಡದು. ದೇಶ ಬಿಟ್ಟು ದೇಶ ಕ್ಕೆ ಬಂದಿರುವ ನನಗೆ ಬರೀ ಮನುಷ್ಯ ಬಾಂಧವ್ಯಗಳಷ್ಟೇ ಅಲ್ಲ. ಕಾಲ ಕಾಲಕ್ಕೆ ಅರಳುವ ಹೂ, ಚಿಗುರಿ ಬರಿದಾಗಿ ಮತ್ತೆ ಹಸಿರಾಗುವ ಮರಗಿಡಗಳು, ಹಕ್ಕಿ ಚಿಟ್ಟೆ ಮಾತು ಬಾರದ ಈ ಪ್ರಾಣಿಗಳೂ, ನನ್ನ ಮನಸ್ಸನ್ನು, ಬದುಕನ್ನೂ ಬೆಚ್ಚಗಿಟ್ಟಿವೆ.