“ಕೃಷ್ಣಾರೂಷ” – ನಂಬಿಕೆಯೇ ಜೀವನದ ಆಧಾರ

ಹಿಂದಿನ ಲೇಖನದಲ್ಲಿ “ದೇವರ ಅಸ್ತಿತ್ವ ಉಳಿದವರ ಕಣ್ಣಲ್ಲಿ” ಎನ್ನುವ ಬಗ್ಗೆ ಚರ್ಚಿಸಿದ್ದೆ, ಅವನನ್ನು ಹೇಗೆ ವಿವಿಧ ರೂಪಗಳಲ್ಲಿ ಪೂಜಿಸುತ್ತಾರೆಂದು ನನ್ನ ವಿಚಾರಗಳನ್ನು ಹಂಚಿಕೊಂಡಿದ್ದೆ. ಈ ಬಾರಿ ಲೇಖನಕ್ಕೆ ಅದೇ ವಿಚಾರ ಮುಂದುವರಿಸುವ ಕುರಿತು ಯೋಚಿಸುತ್ತಿರುವಾಗ, ವಿವಿಡ್ಲಿಪಿ ಪ್ರಕಾಶನದ ಪುಸ್ತಕ “ಕೃಷ್ಣಾರೂಷ” ಬಗ್ಗೆ ವಿಚಾರ ಹಂಚಿಕೊಳ್ಳೋಣ ಅನಿಸಿತು. “ಕೃಷ್ಣಾರೂಷ” ಇಂಗ್ಲಿಷ್ನಲ್ಲಿ ಪ್ರಕಟವಾದ ಒಂದು ಪುಸ್ತಕ, ಅತ್ಯಂತ ಸರಳ ಭಾಷೆಯಲ್ಲಿ ಲೇಖಕರು ಜೀವನದ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಅನುಭವ ವಿವರಿಸುವಾಗ ಅದಕ್ಕೆ ತಕ್ಕದಾದ ಶ್ಲೋಕ, ಭಗವದ್ಗೀತೆ, ಶ್ರೀಮದ್ಭಾಗವತ ಇತ್ಯಾದಿ ಯಿಂದ ಆಯ್ದು ಆಯಾ ಭಾಗದಲ್ಲಿ ಹಂಚಿಕೊಂಡಿದ್ದಾರೆ. ಈ ಪುಸ್ತಕವನ್ನು ಸತ್ಯೇಶ್ ಬೆಳ್ಳೂರು ಕನ್ನಡಕ್ಕೆ ಅನುವಾದಿಸಿದ್ದಾರೆ. ಮೂಲ ಲೇಖಕರು ಡಿಂಪಲ್ ಅಗ್ರವಾಲ್, ಇವರು ಕೃಷ್ಣನ ಭಕ್ತರು. ಅವರು ತಮ್ಮ ಅನುಭವಗಳನ್ನು ಮತ್ತು ಕೃಷ್ಣನ ಲೀಲೆಗಳನ್ನು ಇದರಲ್ಲಿ ಬಣ್ಣಿಸಿದ್ದಾರೆ. ಅವರ ಪುಸ್ತಕ ನಮ್ಮ ಪ್ರಕಾಶನದ ಎಂಟನೆಯ ಪುಸ್ತಕ. ಇದು ಆಕಸ್ಮಿಕವೋ ಅಥವಾ ನಮಗೆ ಪ್ರಸಾದದ ರೂಪದಲ್ಲಿ ಬಂದಿದೆಯೋ ಗೊತ್ತಿಲ್ಲ.

ಕೆಲವು ದಿನಗಳ ಹಿಂದೆ ನಮ್ಮ ಪರಿಚಿತರೊಬ್ಬರೊಂದಿಗೆ ಮಾತನಾಡುವಾಗ ತಾವು ನಾಸ್ತಿಕರೆಂದು ತಿಳಿಸುತ್ತಾ ಅದಕ್ಕೆ ದೇವೆರೇ ಕಾರಣ ಎಂದರು. ವಿಚಾರಿಸಿದಾಗ ಗೊತ್ತಾಯಿತು ಅವರ ಪ್ರೀತಿಯ ವ್ಯಕ್ತಿ ಕೋವಿಡ್ ಇಂದ ಅಸ್ವಸ್ಥರಾದಾಗ ಇವರು ದೇವರಲ್ಲಿ ಬೇಡಿಕೊಂಡರೂ ಅವರು ಉಳಿಯಲಿಲ್ಲ. ಅವರವರ ಪರಿಸ್ಥಿತಿ ಅನುಗುಣವಾಗಿ ಜನರು ಇಂತಹ ನಿರ್ಧಾರ ತೆಗೆದುಕೊಳ್ಳುತ್ತಾರೆ, ಯಾರೂ ತಪ್ಪಲ್ಲ. ಈ ಲೇಖನದಲ್ಲಿ ಹಂಚಿಕೊಂಡ ಪುಸ್ತಕದ ಮೂಲ ಲೇಖಕರು ಕ್ಯಾನ್ಸರ್ನಿಂದ ತಮ್ಮ ಜೀವನ ಅಸ್ತವ್ಯಸ್ತವಾದಾಗ ಕೃಷ್ಣನನ್ನೇ ತಮ್ಮ ಮಗನೆಂದು ಪ್ರೀತಿಸಿ, ಪೂಜಿಸಿ ಜೀವಿಸಿದರು. ಆಗ ಅವರಿಗೆ ಮಾನಸಿಕವಾಗಿ ದೊರೆತ ಆಸರೆ ಮುದ್ದು ಕೃಷ್ಣ. ಈ ಪುಸ್ತಕದ ಕೆಲವು ವಿಷಯಗಳನ್ನು ಈ ಲೇಖನದಲ್ಲಿ ಹಂಚಿಕೊಳ್ಳುತ್ತಿದ್ದೇನೆ.

ಅರೋಷ್ ಎಂಬ ಪದದ ಅರ್ಥ ಸೂರ್ಯನ ಮೊದಲ ಕಿರಣ; ಅರೋಷ್ ಮತ್ತು ಕೃಷ್ಣ ನನ್ನಿಬ್ಬರು ಮಕ್ಕಳ ಹೆಸರುಗಳು. ಮೊದಲನೆಯವ ನನ್ನ ಕರುಳ ಬಳ್ಳಿ – ನನ್ನ ರಕ್ತ ಹಂಚಿಕೊಂಡು ಹುಟ್ಟಿದವ, ಎರಡನೆಯವನು ನನ್ನ ಭಾವಬಳ್ಳಿ – ನನ್ನ ಶ್ರದ್ದೆಯಿಂದ ಜನಿಸಿದ (ಇದು ಲೇಖಕರ ಮಾತು). ಇವರ ಜೀವನದ ಅನುಭಗಳು ಪ್ರಾರಂಭ ಆಗುವುದು ಅವರ ಭಿಲಾಯ್ ನಗರದಿಂದ, ಅವರ ತಂದೆ ಮತ್ತು ತಾಯಿ ವಿವರ ಹಾಗು ಮಧ್ಯಮ ವರ್ಗದ ಕುಟುಂಬದೊಂದಿಗೆ. ಇವರ ವಿವರಣೆಯಲ್ಲಿ ಕಂಡು ಬರುವ ಮುಖ್ಯ ವಿಷಯ ಹೇಗೆ ಸರಳ ಜೀವನದಲ್ಲಿ ಬೆಳೆದು ಬಂದದ್ದು, ಪ್ರೀತಿಯಿಂದ ಬೆಸೆದ ಕುಟುಂಬ ಮತ್ತು ಅವರ ಬಾಲ್ಯದಿಂದಲೇ ಭಕ್ತಿ ಜೀವನದ ಒಂದು ಅಂಗವಾಗಿದ್ದು. ಇಂತಹ ವಿವರಣೆ ಕೇಳಿದೊಡನೆ ನೆನಪಾಗುವುದು ಕೆಳಗಿನ ಸಾಲುಗಳು

ನಮ್ಮ ಸಂಸಾರ ಆನಂದ ಸಾಗರ,
ಪ್ರೀತಿಎಂಬ ದೈವವೇ ನಮಗಾಧಾರಾ,
ಆ ದೈವ ತಂದ ವರದಿಂದ,
ಬಾಳೇ ಬಂಗಾರಾ

ತಮ್ಮ ಜೀವನದ ವಿವರಗಳನ್ನು ಹಂಚಿಕೊಳ್ಳುತ್ತ ಲೇಖಕರು ಮದುವೆ ಮತ್ತು ನಂತರ ದಿನಗಳ ಬಗ್ಗೆ ತಿಳಿಸುತ್ತಾರೆ. ಮದುವೆ, ನಂತರ ಗಂಡನ ಮನೆಯ ವಿಷಯ, ಅತ್ತೆ ವಿಷಯ ಎಲ್ಲ ಸಂತೋಷದ ವಿವರ ಹಂಚಿಕೊಂಡು ಮಗನ ಹುಟ್ಟು, ಅರೋಷ್ ಆಗಮನ ಈ ಎಲ್ಲ ಸಂತೋಷದ ಘಳಿಗೆಯಲ್ಲಿ ಬರುವುದು ಆಘಾತವಾದ ವಿಷಯ “ಮಗನ ಕ್ಯಾನ್ಸರ್”. ಅರೋಷ್ಗೆ diffuse pontine glioma, ಒಂದು ಗಡ್ಡೆ ಅವನ ಮೆದುಳಿನಲ್ಲಿ ಇದೆ ಎಂಬುದು ತಿಳಿದು ಅವರ ಜೀವನ ಅಲ್ಲೋಲಕಲ್ಲೋಲವಾಗಿತ್ತು. ಪೂಜೆ, ಪುನಸ್ಕಾರ, ಹೋಮ, ದೇವಸ್ಥಾನ, ದರ್ಗಾ, ಆಯುರ್ವೇದ, ಹೋಮಿಯೋಪಥಿ… ಎಲ್ಲ ಪ್ರಯತ್ನ ನಡೆದರೂ ಕೊನೆಗೆ ಸೂರ್ಯನ ಮೊದಲ ಕಿರಣ ಕಾಣದಾಯಿತು, ಅರೋಷ್ ಅವರನ್ನು ಬಿಟ್ಟು ಹೋದನು. ೨೦೧೪ರಲ್ಲಿ ಬಿಡುಗಡೆಯಾದ “ಹರಿವು” ಚಿತ್ರ ಈ ಒಂದು ಜೀವನದ ತಿರುವಿನಲ್ಲಿ ಬರುವ ಕಠಿಣ ಪಯಣ ಮನ ಮುಟ್ಟುವಂತೆ ಚಿತ್ರಿಸುತ್ತದೆ, ಇದು ನಿಜ ಜೀವನದಲ್ಲಿ ನಡೆದ ಕಥೆಯಾಧಾರಿತ ಚಿತ್ರ. ಸಂಚಾರಿ ವಿಜಯ್ ತಂದೆಯ ಪಾತ್ರದಲ್ಲಿ ಮಾಡಿದ ನಟನೆ ಹೃದಯ ಹಿಂಡುವಂತಿದೆ. ತಾಯಿ ಪ್ರೀತಿಯಂತೆ, ತಂದೆಯ ಪ್ರೀತಿ ಮಗನಿಗೆ ಎಷ್ಟು ಆಳವಾಗಿ ಇರುತ್ತದೆ ಮತ್ತು ಮಗನಿಗಾಗಿ ತಂದೆ ಎಂತಹ ಸಾಹಸಕ್ಕೂ ಸಿದ್ದ ಎಂದು ಇದರಲ್ಲಿ ತೋರಿಸಿದ್ದಾರೆ, ನೋಡಿರದಿದ್ದರೆ ತಪ್ಪದೆ ನೋಡಿ. ಡಿಂಪಲ್ ದಂಪತಿಗಳು ತಮ್ಮ ಮಗ “ಅರೋಷ್” ನ ಕೊನೆಯ ದಿನಗಳ ವಿವರಣೆ ನೀಡುವಾಗ ನನ್ನ ಕಣ್ಣ ಮುಂದೆ ಹರಿವು ಚಿತ್ರ ನೋಡಿದಾಗ ಅದ ಮನ ಕಲುಕುವ ಅನುಭವ ಆಯಿತು. ಇಂತಹದೇ ಕಠಿಣ ಪರಿಸ್ಥಿತಿ ಬಂದಾಗ, ಡಿಂಪಲ್ ದಂಪತಿಗಳಿಗೆ ಬಂದ ಪ್ರಶ್ನೆ “ದೇವರು ಇಂತಹ ಕಠಿಣ ಪರೀಕ್ಷೆ ಯಾವ ಕಾರಣಕ್ಕೆ ಒಡ್ಡುತ್ತಾನೆ”.

ನಾಗರ ಹೊಳೆಯ ಚಿತ್ರ ಹಾಡಿನ ಸಾಲುಗಳು ನಿಜ ಎನಿಸುತ್ತದೆ

ಇಲ್ಲೇ ಸ್ವರ್ಗ, ಇಲ್ಲೇ ನರಕ
ಮೇಲೇನಿಲ್ಲ ಸುಳ್ಳು..
ಹುಟ್ಟು ಸಾವು ಎರಡರ ಮಧ್ಯೆ..
ಮೂರು ದಿನದ ಬಾಳು

“ಅರೋಷ್” ಇಲ್ಲದ ಬರಿದಾದ ಜೀವನದಲ್ಲಿ ಕಷ್ಟದಿಂದ ಜೀವನ ಸವೆಸುತ್ತಿರುವಾಗ ಡಿಂಪಲ್ ದಂಪತಿಗಳಿಗೆ ಆಸರೆಯಾಗಿ ಸಿಕ್ಕಿದ್ದು ಭಗವದ್ಗೀತೆ, ಮತ್ತು ಮುದ್ದು ಕೃಷ್ಣ. ಅವರ ನೆರೆಮನೆಯ ಗೆಳತೀ ಶ್ವೇತಾ ಚತುರ್ವೇದಿ ಅವರು ಪರಿಚಯಿಸಿದ ಇಸ್ಕಾನ್ ಶಿಬಿರ ಅವರಿಗೆ ಹೊಸ ದಾರಿ ಒದಗಿಸಿತು.

ಯೇ ಯಥಾ ಮಾಂ ಪ್ರಪದ್ಯಂತೇ ತಾಂಸ್ತಥೈವ ಭಜಾಮ್ಯಹಮ್ |
ಮಮ ವರ್ತ್ಮಾನುವರ್ತಂತೇ ಮನುಷ್ಯಾಃ ಪಾರ್ಥ ಸರ್ವಶಃ |
(ಭಗವದ್ಗೀತೆ ೪-೧೧)

ವಿವರ: ಯಾರು ತಮ್ಮನು ಯಾವ ರೀತಿಯಲ್ಲಿ ನನ್ನಲ್ಲಿ ಅರ್ಪಿಸಿಕೊಳ್ಳುತ್ತಾರೋ, ಅವರನ್ನು ಅದೇ ರೀತಿಯಲ್ಲಿ ಅನುಗ್ರಹಿಸುತ್ತೇನೆ.

ಭಕ್ತ ಕುಂಬಾರದ ಹಾಡು ಇಲ್ಲಿ ಸೂಕ್ತವೆನಿಸುತ್ತದೆ

ನಾನೂ ನೀನೂ ನೆಂಟರಯ್ಯಾ
ನಮಗೆ ಭೇದ ಇಲ್ಲವಯ್ಯಾ
ಮಾಧವ, ನಿನ್ನ ನಾಮಾಮೃತದ
ಸಾಧನೆ ಒಂದೇ ಸಾಕಯ್ಯ ತಂದೆ

“ಕೃಷ್ಣ ನಿನ್ನ ನಾಮಾಮೃತದ ಪ್ರೀತಿ ಒಂದೇ ಸಾಕಯ್ಯ ಮಗನೆ” ಎನ್ನುವ ಭಾವದಲ್ಲಿ ಡಿಂಪಲ್ ದಂಪತಿಗಳು ಕೃಷ್ಣನನ್ನು ತಮ್ಮ ಮಗನೆಂದು ಆರಾಧಿಸಲು ಆರಂಭಿಸಿದರು. ಕುಳಿತರೆ ಕೃಷ್ಣ, ನಿಂತರೆ ಕೃಷ್ಣ, ಉಂಡರೆ ಕೃಷ್ಣ ಅನ್ನುವ ತನಕ ಕೃಷ್ಣನನ್ನು ಮಗನೆಂದು ಪ್ರೀತಿಸಿದರು, ಪೂಜಿಸದರು. ಅವರಿಗೆ ಕೃಷ್ಣನೇ ಅರೋಷನಾದ, ಮತ್ತು ಅರೋಷ ಕೃಷ್ಣನಾದ. ಅವರ ಈ ಪ್ರೀತಿಗೆ ಅಕಸ್ಕಿವಾಗಿ ಅವರಿಗೆ ಜಗನಾಥಪುರಿಗೆ ಹೋಗುವ ಅವಕಾಶ ದೊರೆಯಿತು, ನಂತರ ಶ್ರೀಮದ್ಭಾಗವತ ಓದುವ ಅವಕಾಶ ದೊರಕಿತು. ತಮ್ಮ ಭಕ್ತಿ ಪಥದ ಅನುಭವಗಳನ್ನು ಮುಂದಿನ ಅಧ್ಯಾಯಗಳಲ್ಲಿ ಸುಂದರವಾಗಿ ವಿವರಿಸಿದ್ದಾರೆ.

ಸಮೋಽಹಂ ಸರ್ವಭೂತೇಷು ನ ಮೇ ದ್ವೇಷ್ಯೋಽಸ್ತಿ ನ ಪ್ರಿಯಃ |
ಯೇ ಭಜಂತಿ ತು ಮಾಂ ಭಕ್ತ್ಯಾ ಮಯಿ ತೇ ತೇಷು ಚಾಪ್ಯಹಮ್ ||
ಭವದ್ಗೀತೆ (೯ -೨೯)

ಭಗವಂತನಿಗೆ ಎಲ್ಲರೂ ಸಮಾನರು. ದೇವರಿಗೆ ಅಚ್ಚುಮೆಚ್ಚಿನವರು ಅಥವಾ ದ್ವೇಷಿಸಲ್ಪಡುವವರು ಯಾರೂ ಇಲ್ಲ. ಆದರೆ, ಯಾರು ನಿಷ್ಕಲ್ಮಷ ಭಕ್ತಿಯಿಂದ ಭಗವಂತನನ್ನು ಆರಾಧಿಸುತ್ತಾರೋ, ಭಗವಂತನು ಅಂತಹ ಭಕ್ತರ ಹೃದಯದಲ್ಲಿ ಇರುತ್ತಾನೆ.

ಅವರ ಪ್ರೀತಿ ಮತ್ತು ಭಕ್ತಿಗೆ ಮೆಚ್ಚಿ ಅವರಿಗೆ ಎರಡನೆಯ ಮಗು ಬರುವ ಸುದ್ದಿ ಅವರ ಜೀವನದ ಸಂತೋಷದ ಕ್ಷಣಗಳ ಆಗಮನವಾಯಿತು. ಅವರ ಜೀವನದಲ್ಲಿ ಒಂದರ ನಂತರ ಇನ್ನೊಂದು, ಹೀಗೆ ಎರಡು ಹೆಣ್ಣು ಮಕ್ಕಳ ಸೌಭಾಗ್ಯ ದೊರಕಿತು.

ದೇವರ ಆಟ ಬಲ್ಲವರಾರು
ಆತನ ಎದಿರು ನಿಲ್ಲುವರಾರು
ಕೇಳದೆ ಸುಖವ ತರುವ
ಹೇಳದೆ ದುಃಖವ ಕೊಡುವ
ತನ್ನ ಮನದಂತೆ ಕುಣಿಸಿ ಆಡುವ

ಅಂತೆಯೇ ಎರಡು ಮಕ್ಕಳ ಆಗಮನ ಡಿಂಪಲ್ ದಂಪತಿಗಳ ಜೀವನ ಬದಲಾಯಿಸಿತು. ಸಂತೋಷದ ಜೀವನ ಅನುಭವಿಸಿದರು ಆದರೂ ಅದು ಹೆಚ್ಚು ದಿನ ಉಳಿಯಲಿಲ್ಲ. ಜೀವನದ ಮತ್ತೊಂದು ತಿರುವು ಬಂದು, ಮೂಲ ಲೇಖಕರಾದ ಡಿಂಪಲ್ ಅವರಿಗೆ ಕ್ಯಾನ್ಸರ್ ಆಗಿ ಚೇತರಿಸಿಕೊಳ್ಳುತ್ತಿದ್ದಾರೆ.

ನಾ ಮಾಡಿದ ಕರ್ಮ ಬಲವಂತವಾದರೆ
ನೀ ಮಾಡುವುದೇನೋ ದೇವ ಸಾಮಾನ್ಯವಲ್ಲಿದು
ಬ್ರಹ್ಮ ಬರೆದ ಬರಹ ನೇಮದಿಂದಲಿ ಎನ್ನ ಹಣೆಯಲ್ಲಿ ಬರೆದುದಕೆ

ಕೃಷ್ಣನ ಜೊತೆಗಿದ್ದರೂ ದ್ರೌಪದಿ ತನ್ನ ಪಾಲಿನ ಪಡೆದ ಸಂಕಷ್ಟಗಳನ್ನು ಅನುಭವಿಸಬೇಕಾಯಿತು, ಅಂತಹ ಸಂಕಟಗಳ ನಡೆವೆಯೂ ಕೃಷ್ಣನ ಸಾಂಗತ್ಯ ಅವಳಿಗೆ ಬಲದಂತೆ ಇತ್ತು. ಇಂತಹ ಸಾಂಗತ್ಯ ಇದೆ ಎಂಬ ನಂಬಿಕೆ ಎಂತಹ ಕಷ್ಟ ಕಾಲದಲ್ಲೂ ಪರಿಸ್ಥಿತಿ ಎದರಿಸಲು ಧೈರ್ಯ, ಸ್ಥೈರ್ಯ ಕೊಡುತ್ತದೆ. ಈ ನಂಬಿಕೆಯೇ ಜೀವನಕ್ಕೆ ರಕ್ಷಣೆ ನೀಡಿ, ಮಾರ್ಗದರ್ಶಿ ಆಗುತ್ತದೆ. ಒಬ್ಬ ವ್ಯಕ್ತಿಯ ಜೀವನದಲ್ಲಿ ಎಷ್ಟು ಕಷ್ಟ ಇದ್ದರೂ ಹೇಗೆ ಅದನ್ನು ಎದುರಿಸಿದರು ಎಂದು ಸಂಕ್ಷಿಪ್ತವಾಗಿ ಅವರ ಜೀವನಗಾಥೆ ವಿವರ ಇಲ್ಲಿ ಹಂಚಿಕೊಂಡಿದ್ದೇನೆ.

ಪ್ರೇಮಲತಾಅವರ ‘ನಂಬಿಕೆಯೆಂಬ ಗಾಳಿಕೊಡೆ’ ಕಥಾಸಂಕಲನ – ಕೆಲವುಅನಿಸಿಕೆಗಳು

ಡಾ.ಜಿ.ಎಸ್.ಶಿವಪ್ರಸಾದ್

ಪ್ರೇಮಲತಾ ಅವರ 'ನಂಬಿಕೆಯೆಂಬ ಗಾಳಿಕೊಡೆ'  ಕಥಾ ಸಂಕಲನವನ್ನು ಇತ್ತೀಚಿಗೆ ಓದಿ ಮುಗಿಸಿ ನನ್ನ ಕೆಲವು ಅನಿಸಿಕೆಗಳನ್ನು ಇಲ್ಲಿ ದಾಖಲಿಸಿದ್ದೇನೆ. ಈ ಕೃತಿಯನ್ನು ಈಗಾಗಲೇ ಓದಿರುವವರಿಗೆ ಈ ನನ್ನ ಬರಹ ಹೊಸ ದೃಷ್ಟಿ ಕೋನಗಳನ್ನು ನೀಡಬಹುದು. ಇನ್ನು ಓದಬೇಕು ಎಂಬ ಆಕಾಂಕ್ಷೆ ಉಳ್ಳವರಿಗೆ ಈ ಲೇಖನ ಪ್ರವೇಶ ಪರಿಚಯವನ್ನು ಒದಗಿಸಬಹುದು. ಲೇಖಕ/ಲೇಖಕಿಯರಿಗೆ ತಾವು ಬರೆದ ಕೃತಿಯನ್ನು ಇತರರು ಓದಿದರೆ ಅದರಿಂದ ಉಂಟಾಗುವ ಸಂತಸ ತೃಪ್ತಿ ಒಂದು ಕಡೆಯಾದರೆ, ಆ ಕೃತಿಯನ್ನು ಓದಿ ಅದರ ಬಗ್ಗೆ ಚರ್ಚೆ ನಡೆದಲ್ಲಿ ಅವರಿಗೆ ಸಾರ್ಥಕತೆಯ ಭಾವ ಉಂಟಾಗಬಹುದು. ಒಂದು ಕೃತಿಯ ವಿಷಯ ವಸ್ತು, ಆಳ ಮತ್ತು ವಿಸ್ತಾರಗಳು ಈ ಅಂಶಗಳನ್ನು ನಿರ್ಧರಿಸಬಹುದು.  ಬರಹಗಾರರಿಗೆ ಅದಕ್ಕಿಂತ ಹೆಚ್ಚಿನ ನಿರೀಕ್ಷೆ ಇರಲಾರದು. ಇನ್ನು ಕೆಲವು ಕರ್ತೃಗಳು "ಯಾರು ಕಿವಿ ಮುಚ್ಚಿದರು ನನಗಿಲ್ಲ ಚಿಂತೆ" ಎಂಬ ನಿರ್ಲಿಪ್ತ ನಿಲುವಿನಲ್ಲಿ ತಮ್ಮ ಒಂದು ಆತ್ಮ ತೃಪ್ತಿಗೆ ಬರವಣಿಗೆಯನ್ನು ಮುಂದುವರಿಸಬಹುದು. ಅನಿವಾಸಿ ನೆಲದಲ್ಲಿ ಮೂಡಿ ಬರುವ ಕನ್ನಡ ಕೃತಿಗಳನ್ನು ಇಲ್ಲಿಯ ಓದುಗರು ಓದಿ ಉತ್ತೇಜಿಸುವುದು, ಸಾಧ್ಯವಾದಲ್ಲಿ ಚರ್ಚೆಗೆ ಒಳಪಡಿಸುವುದು ಅಗತ್ಯವಷ್ಟೇ ಅಲ್ಲ, ಅದು ಅನಿವಾಸಿ  ಕನ್ನಡಿಗರ ಜವಾಬ್ದಾರಿಯೂ ಹೌದು. ಇದನ್ನು ನಮ್ಮ ಅನಿವಾಸಿ ದಶಮಾನೋತ್ಸವ ಸಂದರ್ಭದಲ್ಲಿ ಅನುಷ್ಠಾನಕ್ಕೆ ತರಲಾಯಿತು. ಸಮಯೋಚಿತವಾಗಿ ವಾಟ್ಸ್ ಆಪಿನಲ್ಲೂ ಚರ್ಚೆ ಮಾಡುಕೊಳ್ಳುತ್ತ ಬಂದಿದ್ದೇವೆ. ನನ್ನ ಒಂದು ಸಣ್ಣ ಕಾಣಿಕೆ ಈ ಬರಹದ ರೂಪದಲ್ಲಿ ಅಭಿವ್ಯಕ್ತಗೊಂಡಿದೆ. ಇಲ್ಲಿ ಸಣ್ಣಕಥೆಗಳ ಬಗ್ಗೆ ನನ್ನ ಕೆಲವು ಸಾರ್ವತ್ರಿಕ ಅನಿಸಿಕೆಗಳನ್ನು ಬೆಸೆಯಲಾಗಿದೆ. 

ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು, ಹೊಸ ವರ್ಷದಲ್ಲಿ ಇನ್ನೂ ಹೆಚ್ಚಿನ ಹೊಸ ಕೃತಿಗಳು ಹೊರಬಂದು ಸೃಜನಶೀಲತೆ ವಿಜೃಂಭಿಸಲಿ

-ಸಂ
ಪ್ರೇಮಲತಾ ಅವರು ದಶಕಗಳಿಂದ ಸಣ್ಣ ಕಥೆಗಳನ್ನು ಬರೆದು ಸುಧಾ, ಮಯೂರ ಮುಂತಾದ ಸಂಚಿಕೆಗಳಲ್ಲಿ ಪ್ರಕಟಿಸಿದ್ದಾರೆ. ಹಾಗೆ ಮೂರು ಕಥಾಸಂಕಲನಗಳನ್ನು ಈಗಾಗಲೇ ಪ್ರಕಟಿಸಿ ಖ್ಯಾತರಾಗಿದ್ದಾರೆ. ಅವರ ‘ನಂಬಿಕೆಯೆಂಬ ಗಾಳಿಕೊಡೆ’ ಕಥಾ ಸಂಕಲನವು ವೀರಲೋಕ ಪ್ರಕಾಶನದಿಂದ ೨೦೨೩ರಲ್ಲಿ ಲೋಕಾರ್ಪಣೆಗೊಂಡಿದೆ. ಇಲ್ಲಿ ೧೦ ಸಣ್ಣ ಕಥೆಗಳಿವೆ. ಪುಸ್ತಕ ತರಿಸಿಕೊಂಡು ಹಲವಾರು ದಿನಗಳು ಕಳೆದಿದ್ದರೂ ಈಗ ಸಮಯ ಒದಗಿಬಂದು ಇತ್ತೀಚಿಗಷ್ಟೇ ಓದಿ ಮುಗಿಸಿ, ನನ್ನ ಕೆಲವು ಪ್ರಾಮಾಣಿಕ ಅನಿಸಿಕೆಗಳನ್ನು ಹಂಚಿಕೊಂಡಿದ್ದೇನೆ. ಇದೊಂದು ವಿಮರ್ಶೆಯಾಗಿ ಮೂಡಿ ಬಂದಿದ್ದರೆ ಹಾಗೂ ಇರಲಿ. 

ಈ ಸಂಕಲನದ ಶೀರ್ಷಿಕೆ ಮತ್ತು ಮುಖಪುಟ ಇಲ್ಲಿಯ ಕಥೆಗಳ ರೂಪಕದಂತೆ ನಿಂತಿದೆ. ಸ್ವತಃ ಲೇಖಕಿ ತಮ್ಮ ಅರಿಕೆಯಲ್ಲಿ ಪ್ರಸ್ತಾಪಿಸಿರುವಂತೆ "ನಂಬಿಕೆಗಳೇ ಜೀವನಕ್ಕೆ ಆಧಾರ, ಬದುಕೇ ಒಂದು ನಂಬಿಕೆ" ಬದುಕಿನ ಹಲವಾರು ಸನ್ನಿವೇಶಗಳಲ್ಲಿ ಈ ನಂಬಿಕೆ ಎನ್ನುವುದು ಚುಕ್ಕಾಣಿಯಾಗಿ ನಮ್ಮ ದಿಕ್ಕು ದೆಸೆಗಳನ್ನು ಬದಲಾಯಿಸುತ್ತದೆ ಎಂಬ ವಿಚಾರ ಸೋಜಿಗವಾದದ್ದು. ಕ್ರಿಸ್ತ್ಮಸ್ ಸಮಯದಲ್ಲಿ ಒಬ್ಬ ಎಳೆ ಬಾಲಕ ರಾತ್ರಿ ತಾನು ಮಲಗಿದ್ದ ಸಮಯದಲ್ಲಿ ಸ್ಯಾಂಟಕ್ಲೌಸ್ ಬಂದು ತನಗೆ ಉಡುಗೊರೆಯನ್ನು ಕೊಡುತ್ತಾನೆ ಎನ್ನುವ ನಿರೀಕ್ಷೆ ಒಂದು ನಂಬಿಕೆಯಾದರೆ, ಬೆನ್ನಿಗೆ ಬಾಂಬು ಕಟ್ಟಿಕೊಂಡಿರುವ ತರುಣ ಭಯೋತ್ಪಾದಕ ತಾನು ಜಿಹಾದಿನಲ್ಲಿ ಮಡಿದರೆ ಪರಲೋಕದಲ್ಲಿ ಅಪ್ಸರೆಯನ್ನು ಕೂಡಬಹುದು ಎಂಬ ಅವನ ನಿರೀಕ್ಷೆಯೂ ನಂಬಿಕೆಯೇ. ಆದರೆ ಈ ರೀತಿಯ ನಂಬಿಕೆಗಳ ಪರಿಣಾಮಗಳೇನು ಎಂಬುದು ಮುಖ್ಯವಾದ ಪ್ರಶ್ನೆ. ನಂಬಿಕೆ ಮತ್ತು ತರ್ಕ, ವೈಚಾರಿಕತೆ, ವಿಜ್ಞಾನ ಇವುಗಳ ಮುಖ ಮುಖಿಯನ್ನು ಈಗಾಗಲೇ ಹಲವಾರು ಕಥೆ, ಕಾದಂಬರಿ ಮತ್ತು ಸಿನಿಮಾಗಳು ಶೋಧಿಸಿವೆ. ಪ್ರೇಮಲತಾ ಅವರೂ ಈ ವಿಚಾರವನ್ನು ಕೈಗೆತ್ತಿಕೊಂಡಿದ್ದಾರೆ. ಸಂಬಂಧಗಳನ್ನು ಬೆಸೆಯುವುದು ಈ ನಂಬಿಕೆಗಳೇ. ಒಬ್ಬ ಬರಹಗಾರನಿಗೂ ತನ್ನ ಬರಹ ಓದುಗರ ಗ್ರಹಿಕೆಗೆ, ನಿರೀಕ್ಷೆಗೆ ನಿಲುಕಬಹುದು ಎನ್ನುವ ಹಂಬಲವೂ ಈ ನಂಬಿಕೆಯನ್ನು ಆಧರಿಸಿರುತ್ತದೆ. ಈ ಸಂಕಲನದ ಹಲವಾರು ಕಥೆಗಳ ಭೂಮಿಕೆ ಒಂದಲ್ಲ ಒಂದು ರೀತಿ ಆ ನಂಬಿಕೆಗೆ ಸಂಬಂಧಿಸಿದ್ದು.

ಕಥೆ ಹುಟ್ಟುವುದೇ ಜೀವನದ ಅನುಭವಗಳ ಮೇಲೆ. ಅದು ಬರಹಗಾರನ ವೈಯುಕ್ತಿಕ ಜೀವನ ಅನುಭವವಾಗಿರಬಹುದು, ಇಲ್ಲವೇ ಬರಹಗಾರ ಕಂಡು ಕೇಳಿದ ಅನುಭವವಾಗಿರಬಹುದು. ಈ ಅನುಭವ ಸಾಮಾನ್ಯನಿಗೆ ಒಂದು ಸಾಧಾರಣ ಘಟನೆ, ಸನ್ನಿವೇಶದಂತೆ ಕಂಡರೂ ಸೃಜನಶೀಲ ಲೇಖಕ, ಲೇಖಕಿಯರು ತಮ್ಮ ಅಪ್ರತಿಮ ಕಲ್ಪನಾ ಶಕ್ತಿಯಿಂದ ಆ ಘಟನೆಯನ್ನು ಗ್ರಹಿಸಿ ಅದಕ್ಕೆ ರೆಕ್ಕೆ, ಪುಕ್ಕ, ಮಾಂಸ, ಎಲಬುಗಳನ್ನು ಜೋಡಿಸಿ ಒಂದು ಸುಂದರ ಕಲಾಕೃತಿಯನ್ನು ಕಡೆದು ನಿಲ್ಲಿಸುತ್ತಾರೆ. ಆ ಪ್ರತಿಭೆ ಪ್ರೇಮಲತಾ ಅವರಿಗೆ ನಿಜವಾಗಿಯೂ ಪ್ರಾಪ್ತವಾಗಿದೆ.

ಬದುಕಿನ ಪ್ರಸಂಗಗಳ ಚಿತ್ರವೇ ಸಣ್ಣ ಕಥೆಯ ಬುನಾದಿ, ಹೀಗಾಗಿ ಸಣ್ಣ ಕಥೆಗಳಲ್ಲಿ, ಕೆಲವೇ ಪುಟಗಳಲ್ಲಿ ಕಥೆಯನ್ನು ಹೇಳಿ ಮುಗಿಸಬೇಕಾದ ಒತ್ತಡ ಇರುವುದರಿಂದ ಇಲ್ಲಿ ಹೆಚ್ಚು ಪಾತ್ರಗಳನ್ನು ತರಲು ಅವಕಾಶವಿಲ್ಲ ಮತ್ತು ಇಲ್ಲಿ ಪಾತ್ರಗಳನ್ನು ಆಳವಾಗಿ ಪೋಷಿಸಲು ಸಾಧ್ಯವಿಲ್ಲ. ಕಾದಂಬರಿಯಲ್ಲಿ ಈ ನಿರ್ಬಂಧೆನೆಗಳು ಇರುವುದಿಲ್ಲ. ಕಾದಂಬರಿಗಳಲ್ಲಿ ಕಾಣುವ ಆಳ, ವಿಸ್ತಾರಗಳನ್ನು ಸಣ್ಣ ಕಥೆಗಳಲ್ಲಿ ತರಲು ಸಾಧ್ಯವಿಲ್ಲವಾದರೂ ಸಣ್ಣ ಕಥೆಗಳ ಅನುಕೂಲವೆಂದರೆ ಇಲ್ಲಿ ವಿವಿಧ ಸಾಮಾಜಿಕ ವಿಷಯಗಳನ್ನು ಕಥಾವಸ್ತುವಾಗಿ ಬಳಸ ಬಹುದು, ಹೆಚ್ಚು ವಿಚಾರಗಳನ್ನು ಚಿಂತನೆಗೆ ಒಳಪಡಿಸಬಹುದು. ಕಾದಂಬರಿ ಹರಿಯುವ ನದಿಯಾದರೆ, ಸಣ್ಣ ಕಥೆಗಳು ಕೆರೆಗಳಂತೆ.

ಸಣ್ಣ ಕಥೆಗಳು ಒಡ್ಡುವ ಎಲ್ಲ ಮಿತಿಯೊಳಗೂ ಕೂಡ ಪ್ರೇಮಲತಾ ಅವರು ಸನ್ನಿವೇಶಗಳ ಜೊತೆ ಜೊತೆಗೆ ತಮ್ಮ ಕಥಾ ನಾಯಕ ನಾಯಕಿಯರನ್ನು ಪೋಷಿಸಿದ್ದಾರೆ. ಈ ಸಂಕಲನದ "ತೆರವು' ಎಂಬ ಕಥೆಯಲ್ಲಿ ಕರ್ನಾಟಕದ ರಿಯಲ್ ಎಸ್ಟೇಟ್ ಅವ್ಯವಹಾರದಲ್ಲಿ ಸಿಕ್ಕಿಕೊಂಡಿರುವ ದಂಪತಿಗಳ ಸನ್ನಿವೇಶದಲ್ಲಿ ಏನನ್ನೂ ಸಾಧಿಸಲಾರದ ನಾಮರ್ದ ಗಂಡ ಮತ್ತು ಮನೆ-ಮಡದಿಯಾದರೂ ಸಾಕಷ್ಟು ವಿಷಯಗಳನ್ನು ತಿಳಿದುಕೊಂಡು ದಿಟ್ಟತನದಿಂದ ಲ್ಯಾನ್ಡ್ ಮಾಫಿಯಾ ಗೂಂಡಾಗಳನ್ನು ನಿಭಾಯಿಸುವ ಗೀತಾಳ ಪಾತ್ರ ಇದಕ್ಕೆ ಸಾಕ್ಷಿಯಾಗಿದೆ. ತೇಜೇಸ್ವಿಯವರ 'ಕಿರಿಗೂರಿನ ಗೈಯಾಳಿಗಳು' ಕಥೆಯನ್ನು ನೆನಪಿಗೆ ತಂದಿದೆ.

ಅನಿವಾಸಿ ಲೇಖಕರು ತಮ್ಮ ಪರಿಸರದ ನೆಲೆಯಲ್ಲಿ ಘಟಿಸುವ ಕಥೆಗಳನ್ನು ದೂರದ ಕನ್ನಡ ನಾಡಿಗೆ ತಿಳಿಸ ಬೇಕೇ ಅಥವಾ ಅವರು ಎಲ್ಲಿದ್ದರೂ, ಎಂತಿದ್ದರೂ ಕನ್ನಡ ನೆಲೆದ ಕಥೆಗಳನ್ನಷ್ಟೇ ಬರೆಯ ಬೇಕೇ ಎಂಬ ಪ್ರಶ್ನೆ ಮೂಡುವುದು ಸಹಜವೇ. ಇಂಗ್ಲೆಂಡಿನಲ್ಲಿ ನಡೆದ ಕಥೆ ಕನ್ನಡ ಜನಕ್ಕೆ ಸಲ್ಲಬಹುದೇ ಎಂತೆಂಬ ಪ್ರಶ್ನೆ ಅನಿವಾಸಿ ಬರಹಗಾರರನ್ನು ಕಾಡುವುದು ಸಹಜ. ಒಬ್ಬ ಲೇಖಕ ಯಾವ ದೇಶ ಕಾಲಮಾನಗಳಲ್ಲಿದ್ದರೂ ಅದು ಮನುಷ್ಯ ಸಂಬಂಧ, ಸಹಜ ಸ್ವಭಾವಗಳ ವೈರುಧ್ಯ ಮತ್ತು ಮಾನವೀಯ ಮೌಲ್ಯಗಳನ್ನು ಒಳಗೊಂಡಿದ್ದಲ್ಲಿ ಅದು ಎಲ್ಲಾ ದೇಶಕ್ಕೂ ಮತ್ತು ಎಲ್ಲಾ ಕಾಲಕ್ಕೂ ಪ್ರಸ್ತುತವಾಗುತ್ತವೆ. ಈ ಕಾರಣಗಳಿಂದ ನಮಗೆ ರಷ್ಯಾದ ಟಾಲ್ಸ್ಟಾಯ್ ಮತ್ತು ಬಂಗಾಳದ ಟ್ಯಾಗೋರ್ ಬರೆದ ಕಥೆಗಳು ಹತ್ತಿರವಾಗುತ್ತವೆ. ಪ್ರೇಮಲತಾ ಅವರು ಇಂಗ್ಲೆಂಡಿನಲ್ಲಿ ನೆಲೆಸಿರುವ ಕನ್ನಡತಿ. ಅವರ ಪರಿಸರ ಇಂಗ್ಲೆಂಡಿನ ಆಂಗ್ಲ ಸಂಸ್ಕೃತಿಗೆ ಸಂಬಂಧಿಸಿದ್ದಾದರೂ ಅವರು ಬರೆಯುವ ಕಥೆಗಳು ನಮ್ಮ ಕನ್ನಡ ನೆಲದ ಕಥೆಗಳಾಗಿವೆ. ಇಲ್ಲಿ ಕರ್ನಾಟಕ ನಗರಗಳ, ಮಲೆನಾಡಿನ ದಟ್ಟ ಕಾಡುಗಳ, ಕಾರ್ಪೊರೇಟ್ ಕಂಪನಿಗಳ ಕಥೆ ಇವೆ. ಇದಕ್ಕೆ ಹೊರತಾಗಿ 'ದ್ರೋಹ' ಎಂಬ ಕಥೆ ಲಂಡನ್ ಮತ್ತು ಸಿರಿಯಾದಲ್ಲಿ ಸಂಭವಿಸುತ್ತದೆ.

ಇನ್ನೊಂದು ವಿಚಾರ; ಕಥೆ ಯಾವುದೇ ನೆಲದಲ್ಲಿ ಹುಟ್ಟಿಕೊಂಡರೂ ಆ ಕಥನ ಪ್ರಪಂಚದ ಬೇರೆಡೆ ಇನ್ನೊಬ್ಬರ ಕಥೆಯಾಗಿರಬಹುದು. ಮನುಷ್ಯನ ಮೂಲಭೂತ ಸ್ವಭಾವಗಳಿಗೆ ಬಣ್ಣ, ಸಂಸ್ಕೃತಿ, ಗಡಿ ರೇಖೆಗಳ ಹಂಗುಂಟೆ? ಈ ಸಂಕಲನದ ಶೀರ್ಷಿಕೆ ಕಥೆಯಾಗಿರುವ ‘ನಂಬಿಕೆಯೆಂಬ ಗಾಳಿಕೊಡೆ’ಯಲ್ಲಿ ಬೆಂಗಳೂರಿನ ಒಂದು ಖಾಸಗಿ ಆಫೀಸಿನ ಉದ್ಯೋಗಿಯ ಬೀಳ್ಕೊಡುಗೆ ಪಾರ್ಟಿಯಲ್ಲಿ ಲಕ್ಷ್ಮಿ ಎಂಬ ವಿವಾಹಿತ ಮಹಿಳೆಗೆ ಅವಳ ಪಾನೀಯದಲ್ಲಿ ಒಬ್ಬ ಕುಹಕಿ ಕದ್ದು ಮುಚ್ಚಿ ಮಾದಕವಸ್ತುವನ್ನು ಸೇರ್ಪಡಿಸಿ (ಸ್ಪೈಕ್ ಮಾಡಿ) ಅದರ ಪರಿಣಾಮವಾಗಿ ಲಕ್ಷ್ಮಿ ನಶೆಯಲ್ಲಿದ್ದಾಗ ಅವಳನ್ನು ಅತ್ಯಾಚಾರಕ್ಕೆ ಒಳಪಡಿಸುತ್ತಾನೆ. ಲಕ್ಷ್ಮಿಯ ಅತ್ಯಾಚಾರವನ್ನು ನಮ್ಮ ಸಮಾಜ ಹೇಗೆ ಗ್ರಹಿಸುತ್ತದೆ, ನಮ್ಮ ವ್ಯವಸ್ಥೆ ಹೇಗೆ ತನಿಖೆ ನಡೆಸುತ್ತವೆ ಮತ್ತು ನಂಬಿಕೆ ಆಧಾರದ ಮೇಲೆ ಜನರ ನಿರೀಕ್ಷೆ ಯಾವ ಯಾವ ರೂಪಗಳನ್ನು ತಳೆಯುತ್ತದೆ, ತನಗೆ ಅತ್ಯಾಚಾರವಾಗಿದೆ ಎಂದು ಲಕ್ಷ್ಮಿ ಬಹಿರಂಗವಾಗಿ ಒಪ್ಪಿಕೊಂಡು ಸೋಷಿಯಲ್ ಮೀಡಿಯಾಗಳಲ್ಲಿ ಆ ವಿಚಾರವನ್ನು ಹಂಚಿಕೊಂಡದ್ದು ಸರಿಯೇ, ತಪ್ಪೇ? ಎಂಬ ವಿಚಾರಗಳ ಹಿನ್ನೆಲೆಯಲ್ಲಿ ಕಥೆಯನ್ನು ಹೆಣೆಯಲಾಗಿದೆ. ಆಶ್ಚರ್ಯವೆಂದರೆ ಪ್ರೇಮಲತಾ ಈ ಕಥೆಯನ್ನು ಬರೆದು ನಾಲ್ಕು ವರುಷಗಳಾಗಿವೆ, ಬಹುಶಃ ಅದೇ ಸಮಯದಲ್ಲಿ, ಫ್ರಾನ್ಸ್ ದೇಶದಲ್ಲಿ, ಗೆಜೆಲ್ ಪೆಲಿಕೋ ಎಂಬ ಹಿರಿಯ ಮಹಿಳೆಯ ಸ್ವಂತ ಗಂಡನೇ ಅವಳಿಗೆ ಗೊತ್ತಾಗದಂತೆ ಡ್ರಗ್ಸ್ ಕೊಟ್ಟು ನಶೆಯಲ್ಲಿರುವಾಗ ಅವನು ತನ್ನ ಸ್ನೇಹಿತರನ್ನು ಕರೆದು ಅವಳೊಡನೆ ಸಂಭೋಗಿಸಲು ಉತ್ತೇಜಿಸಿದ. ಅದು ಗೆಜೆಲ್ ಮೇಲೆ ನಡೆದ ಅತ್ಯಾಚಾರವೆನ್ನಬಹುದು. ಅಷ್ಟೇ ಅಲ್ಲ ಈ ಅತ್ಯಾಚಾರವನ್ನು ಅವನು ವಿಡಿಯೋ ಮಾಡಿದ್ದು ಈ ವಿಚಾರ ಇತ್ತೀಚಿಗೆ ಬಹಿರಂಗಗೊಂಡು ಅದರ ತನಿಖೆ ನಡೆಯಿತು, ಈ ಸುದ್ದಿ ಬಿಬಿಸಿ ವಾರ್ತೆಯಲ್ಲಿ ಪ್ರಸಾರಗೊಂಡಿತು. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲಾಯಿತು. ನಂಬಿಕೆಯೆಂಬ ಗಾಳಿಕೋಡೆ ಕಥೆಯಲ್ಲೂ ಆಪಾದಿತ, ಲಕ್ಷ್ಮಿ ಮೇಲೆ ನಡೆಸಿದ ಅತ್ಯಾಚಾರವನ್ನು ವಿಡಿಯೋ ಮಾಡಿರುತ್ತಾನೆ. ಇದು ಎಷ್ಟು ಕಾಕತಾಳೀಯವಾಗಿದೆ! ಪ್ರಪಂಚದ ಯಾವುದೋ ಮೂಲೆಯಲ್ಲಿ ಒಬ್ಬ ಕನ್ನಡ ಲೇಖಕಿಯ ಕಲ್ಪನೆಗೆ ದೊರಕಿದ ಕಥೆ, ಇನ್ಯಾವುದೋ ಸಂಸ್ಕೃತಿಯಲ್ಲಿ, ದೇಶದಲ್ಲಿ ಸಂಭವಿಸಿದ ನೈಜ ಘಟನೆಯಾಗಿರುವುದು ಅಚ್ಚರಿಯನ್ನು ಉಂಟುಮಾಡುವಂಥದ್ದು.

ಪ್ರೇಮಲತಾ ಅವರು ಕೈಗೆತ್ತಿಕೊಳ್ಳುವ ಕಥಾವಸ್ತುಗಳು ನಮ್ಮ ನಿಮ್ಮ ಬದುಕಿಗೆ ಬಹಳ ಹತ್ತಿರವಾದದ್ದು. ಅವರ ಕಥೆಗಳಲ್ಲಿ ಪ್ರಾಮಾಣಿಕತೆ ಇದೆ, ಇಲ್ಲಿ ಅಥೆಂಟಿಸಿಟಿ ಇದೆ. ಅವರು ಸಾಮಾಜಿಕ ಸಮಸ್ಯೆಗಳನ್ನು ಅನೇಕ ಸೂಕ್ಷ್ಮ ದೃಷ್ಟಿ ಕೋನಗಳಿಂದ ವಿಶ್ಲೇಷಿಸಿದ್ದಾರೆ, ಇಲ್ಲಿಯ ಕಥೆಗಳು ಹಲವಾರು ಚಿಂತನೆಗಳಿಗೆ ಅನುವು ಮಾಡಿಕೊಡುತ್ತದೆ. ಇಲ್ಲಿ ಅತಿಯಾದ ಭಾವುಕತೆ ಇಲ್ಲ, ಎಲ್ಲ ಸನ್ನಿವೇಶಗಳನ್ನು ಹದವಾಗಿ ನಿರೂಪಿಸಲಾಗಿದೆ. ಇಲ್ಲಿ ಸ್ತ್ರೀ ಭಾವನೆಗಳಷ್ಟೇ ಅಲ್ಲದೆ ಪುರುಷರ ಭಾವನೆಗಳನ್ನು ನಿಭಾಯಿಸಲಾಗಿದೆ. ಇದರ ಉತ್ತಮ ಉದಾಹರಣೆಯನ್ನು 'ಗೊಡ್ಡು' ಎಂಬ ಕಥೆಯಲ್ಲಿ ಕಾಣಬಹುದು. ಸಾಮಾನ್ಯವಾಗಿ ಬಂಜೆತನವೆಂದರೆ ಅದು ಸ್ತ್ರೀಯರಿಗಷ್ಟೇ ಸಂಬಂಧಿಸಿರುವ ವಿಚಾರ ಎಂದು ಸಮಾಜ ನಂಬಿರುತ್ತದೆ. ಮಕ್ಕಳಾಗದ ದಾಂಪತ್ಯದಲ್ಲಿ ಬಹುಪಾಲು ಹೆಂಗಸೇ ಆಪಾದನೆಗೆ ಒಳಗಾಗುವುದನ್ನು ಕಾಣುತ್ತವೆ. ‘ಎಕ್ಸ್ ಎಕ್ಸ್ ವೈ’ (XXY) ಎಂಬ ಗಂಡಸಿನ ಬಂಜೆತನವನ್ನು ಕಥೆಯಲ್ಲಿ ತಂದು ಲೇಖಕಿ ಈ ನಂಬಿಕೆಯನ್ನು ಒಡೆಯುತ್ತಾರೆ. ಕಥಾ ನಾಯಕನಿಗೆ ತನ್ನ ಬಂಜೆ ತನದ ಅರಿವಾದಾಗ ಅವನಿಗೆ ಉಂಟಾಗುವ ಭಾವನೆಗಳ ಏರು ಪೆರುಗಳನ್ನು ಮತ್ತು ತಾನು ನಿಷ್ಪ್ರಯೋಜಕ ಎಂಬ ಮಾನಸಿಕ ತೊಳಲಾಟವನ್ನು ಅತ್ಯಂತ ಮನೋಜ್ಞವಾಗಿ ಸೆರೆ ಹಿಡಿದಿದ್ದಾರೆ. ಸಮಾಜ ತಾನು ನಂಬಿರುವ ಸಾಮಾಜಿಕ "ಸತ್ಯಗಳನ್ನು" ನಂಬಿಕೆಗಳನ್ನು ಒಡೆದು ತೋರಿಸಿದಾಗ ಉಂಟಾಗುವ ಆಘಾತ ಬಹಳ ಆಳವಾದದ್ದು. ಅದು ಸಮಾಜವನ್ನು ತಿದ್ದುವ ಪ್ರಯತ್ನವೂ ಹೌದು. ಈ ಕಾರಣಕ್ಕಾಗಿ ನಮಗೆ ಪ್ರೇಮಲತಾ ಅವರ ಕಥೆಗಳು ಪ್ರಸ್ತುತವಾಗುತ್ತವೆ.

ಸಣ್ಣ ಕಥೆಗಳು ಎಷ್ಟು ಉದ್ದವಾಗಿರಬೇಕು ಎಂಬುದಕ್ಕೆ ಯಾವುದೇ ಅಳತೆಗೋಲುಗಳಿಲ್ಲ. ಹೇಳಿದಷ್ಟೂ ಕಥೆಯೇ. ಪ್ರೇಮಲತಾ ಅವರ ಕಥೆಗಳು ಕೊಂಚ ದೀರ್ಘವೆನಿಸುತ್ತದೆ. ಇವುಗಳ ನಡುವೆ ‘ನಿರ್ವಾತ’ ಎಂಬ ಕಥೆ ನಿಜವಾಗಿಯೂ ಸಣ್ಣ ಕಥೆ ಎನ್ನಬಹುದು. ಕೆಲವೇ ಪುಟಗಳ ಈ ಕಥೆ 'ಇನ್ಸೆಸ್ಟ್' ಕುರಿತಾಗಿದೆ. ಕಥಾನಾಯಕಿಯ ತಂದೆಯೇ ತನ್ನ ಚಿಕ್ಕ ತಾತನಾಗಿರುವ ಕಥೆ ಪರಿಣಾಮಕಾರಿಯಾಗಿದೆ. ಕನ್ನಡದ ಹಿಂದಿನ ಲೇಖಕರು ಸಲಿಂಗಕಾಮ, ವಿಕೃತ ಕಾಮ, ಅತ್ಯಾಚಾರ ಈ ವಿಚಾರಗಳನ್ನು ಮಡಿವಂತಿಕೆಯಿಂದ ಆಯ್ಕೆ ಮಾಡುತ್ತಿರಲಿಲ್ಲ. ಇದು ಸಾಮಾಜಿಕವಾಗಿ ನಿಷಿದ್ಧವಾದ ವಿಷಯವಾಗಿತ್ತು. ಪ್ರೇಮಲತಾ ಅವರು ಈ ರೀತಿಯ ಬಾಹಿರವಾದ ವಿಚಾರಗಳನ್ನು ಮುನ್ನೆಲೆಗೆ ತಂದಿರುವುದು ಶ್ಲಾಘನೀಯ. ಈ ಪ್ರಯತ್ನವನ್ನು ಇತ್ತೀಚಿನ ಇತರ ಲೇಖಕರೂ ಮಾಡುತ್ತಿದ್ದಾರೆ. ಕಥೆ, ಕಾದಂಬರಿ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಈ ರೀತಿ ವಿಷಯಗಳನ್ನು ತರುವುದರಿಂದ ಅದು ಜನ ಸಾಮಾನ್ಯರಲ್ಲಿ ಅರಿವು ಮೂಡಿಸಲು ಸಹಾಯವಾಗುತ್ತದೆ. ಇದರಿಂದ ಸಮಾಜದಲ್ಲಿ ಪರಿವರ್ತನೆ ಆಗಬಹುದು, ಆಗದಿರಬಹುದು, ಆದರೆ ಅರಿವನ್ನು ಹೆಚ್ಚಿಸುವುದು ಲೇಖಕರ ಮತ್ತು ಸಿನಿಮಾ ನಿರ್ದೇಶಕರ ಜವಾಬ್ದಾರಿ.

ಪ್ರೇಮಲತಾ, ತಮ್ಮ ಕಥೆಯಲ್ಲಿ ತಂದಿರುವ ಅನೇಕ ಸ್ತ್ರೀ ಪಾತ್ರಗಳನ್ನು ಸಹಜವಾಗಿ ನಿರೂಪಿಸಿದ್ದಾರೆ. ಇಲ್ಲಿಯ ಬಹುತೇಕ ಕಥೆಗಳಲ್ಲಿ ಸ್ತ್ರೀ ಪಾತ್ರ ಪ್ರಧಾನವಾಗಿರುವಂತೆ ತೋರುತ್ತದೆ. ಇಲ್ಲಿ ಅವಳು ಸತ್ಯಕ್ಕಾಗಿ, ನ್ಯಾಯಕ್ಕಾಗಿ, ಪ್ರೀತಿಗಾಗಿ ಎದ್ದು ನಿಲ್ಲುತ್ತಾಳೆ. ಅತ್ಯಾಚಾರಕ್ಕೆ ಒಳಗಾಗಿ ಹಿಂಸೆಯನ್ನು ಅನುಭವಿಸಿ ತನ್ನ ಹೆಸರಿಗೆ ಒದಗಿದ ಕಳಂಕವನ್ನು ಮುಚ್ಚಿಡದೆ, ಇತರ ಸ್ತ್ರೀಯರ ರಕ್ಷಣೆಗಾಗಿ ತನ್ನ ಅತ್ಯಾಚಾರವನ್ನು ಬಹಿರಂಗಗೊಳಿಸುವ ಧೀಮಂತ ಹೆಣ್ಣಾಗಿ ನಿಲ್ಲುತ್ತಾಳೆ. ಗಂಡು ಮತ್ತು ಹೆಣ್ಣು ಉದ್ಯೋಗಿಗಳಿಗೆ ನೀಡುವ ವೇತನದಲ್ಲಿ ಉಂಟಾಗಿರುವ ತರತಮಗಳಿಗಾಗಿ ಹೋರಾಡಲು ನಿಲ್ಲುತ್ತಾಳೆ. ವಿಚ್ಛೇದನ ಪಡೆದ ಹೆಂಗಸಾದರೂ ತನ್ನ ಭಾವಿ ಪತಿಗೆ ಕ್ಯಾನ್ಸರ್ ರೋಗ ತಟ್ಟಿದ್ದಾಗ ಅವನನ್ನು ಬೆಂಬಲಿಸಿ ನಿಂತು ಸಾಂತ್ವನ ನೀಡುವಷ್ಟು ಉದಾರಿಯಾಗಿರುತ್ತಾಳೆ. ಸಾಂಪ್ರದಾಯ ದೃಷ್ಟಿಕೋನಗಳಲ್ಲಿ ಸ್ತ್ರೀ ಪುರುಷನ ಅಧೀನಳು, ಅಬಲೆ, ಗಂಡನ ನೆರಳಲ್ಲಿ ಜೀವಿಸುವವಳು ಎಂತೆಲ್ಲಾ ನಮ್ಮ ಹಿಂದಿನ ಕಥೆ, ಪುರಾಣ, ಕಾದಂಬರಿ ಮತ್ತು ಸಿನಿಮಾಗಳಲ್ಲಿ ಚಿತ್ರಿಸಲಾಗಿದೆ. ಅದಕ್ಕೆ ವ್ಯತಿರಿಕ್ತವಾಗಿ ಬದಲಾಗುತ್ತಿರುವ ಸಮಾಜದಲ್ಲಿ ಸ್ತ್ರೀಗೆ ತನ್ನದೇ ಅಸ್ತಿತ್ವವಿದೆ, ಅವಳು ತನ್ನ ಸಮಾನ ಹಕ್ಕುಗಳಿಗೆ ನಿಲ್ಲಬಲ್ಲಳು ಎಂಬ ವಿಚಾರವನ್ನು ಇಲ್ಲಿಯ ಕಥೆಗಳಲ್ಲಿ ಕಾಣಬಹುದು. ಜೊತೆಗೆ ಸ್ತ್ರೀ ಒಂದು ಶಕ್ತಿ ಅಷ್ಟೇ ಅಲ್ಲ, ಸ್ನೇಹ, ಪ್ರೀತಿ, ಕರುಣೆ, ಸಹನೆ ಮತ್ತು ಅನುಕಂಪೆಯ ಪ್ರತಿಮೆಯಾಗಿಯೂ ನಿಲ್ಲುತ್ತಾಳೆ.

'ವರ್ತುಲ' ಎಂಬ ಕಥೆ ಬೇರೆ ಕಥೆಗಳಿಗಿಂತ ಭಿನ್ನವಾಗಿ ಎದ್ದು ನಿಲ್ಲುತ್ತದೆ. ಬದುಕೆಂಬ ಸ್ಪರ್ಧೆಯಲ್ಲಿ ನಾವು ಯಶಸ್ಸಿನ ಸಾಧನೆಯಲ್ಲಿ ಸಿಕ್ಕಿಕೊಂಡಿ "ಇರುವುದೆಲ್ಲವ ಬಿಟ್ಟು ಇರದುದರ ಕಡೆ ತುಡಿಯುವ" ನಾಗರೀಕತೆ ಎಂಬ ಖಾಯಿಲೆಯಲ್ಲಿ ನರಳುವವವರ ಚಿತ್ರ ಈ ಕಥೆಯಲ್ಲಿದೆ. ಇಲ್ಲಿ ಪರಿಸರ ನಾಶದ ಬಗ್ಗೆ ಕಾಳಜಿ ಇದೆ. ತೀವ್ರ ಗತಿಯಲ್ಲಿ ಬದಲಾಗಿ ನಿಬಿಡವಾಗಿರುವ ನಗರಗಳ ನಡುವೆ ನಿಡುಸುಯ್ಯುವ ಸ್ವರಗಳ ದನಿಯಿದೆ. "ಹೊಸತಿಗೆ -ಹಳತಿಗೂ, ಒಳ್ಳೆಯದಕ್ಕೂ-ಕೆಟ್ಟದಕ್ಕೂ, ವಿವೇಕಕ್ಕೂ-ಅವಿವೆಕ್ಕಕ್ಕೂ, ಭೂತ-ಭವಿಷ್ಯತ್ತಿಗೂ ಇರುವ ಪರದೆ ಅತಿ ತೆಳುವಾದದ್ದು" ಎಂಬ ಮಾತನ್ನು ಲೇಖಕಿ ಇಲ್ಲಿ ಪ್ರಸ್ತಾಪಿಸುತ್ತಾರೆ. ಈ ಮಾತುಗಳು ಎಲ್ಲರನ್ನು ಕಾಡುವ ವಿಚಾರ. ಹಿಂದೊಮ್ಮೆ ಹಳೆಯದೆಂದು ನಾವೇ ತಿರಸ್ಕರಿಸಿದ ಬದುಕಿನ ರೀತಿಗಳು, ದಿನ ನಿತ್ಯ ಬಳಕೆಯ ವಸ್ತುಗಳು, ಮಣ್ಣಿನ ವಾಸನೆ, ನಿಸರ್ಗದ ತಾಜಾತನ ಕಾಲದ ವರ್ತುಲದಲ್ಲಿ ಕಳೆದು ಹೋಗಿ ಮತ್ತೆ ನಮಗೆ ಅದೇ ಹಳೆತಿನ ಬಗ್ಗೆ ಹೊಸ ವ್ಯಾಮೋಹ ಹುಟ್ಟಿಕೊಳ್ಳುವ ಪರಿ ಸೋಜಿಗವಾದದ್ದು. ಈ ವರ್ತುಲದಲ್ಲಿ ಮೊದಲಾವುದು, ಕೊನೆಯಾವುದು ಎಂಬ ಪ್ರಶ್ನೆ ಕಾಡುತ್ತದೆ. ಪ್ರಗತಿಯ ನೆಪದಲ್ಲಿ ಎಲ್ಲವನ್ನೂ ಕಬಳಿಸುವ ನಮ್ಮ ದುರಾಸೆಯನ್ನು ಪ್ರೇಮಲತಾ ಅವರು "ಹಾವೊಂದು ತನ್ನ ಬಾಲದಿಂದ ಶುರು ಮಾಡಿ ತನ್ನನ್ನು ತಾನೇ ಕಬಳಿಸುವ" ದುರಂತ ಪ್ರಯತ್ನದ ರೂಪಕವನ್ನು ಇಲ್ಲಿ ಇಟ್ಟಿದ್ದು ಅದು ಬಹಳ ಅರ್ಥಪೂರ್ಣವಾಗಿದೆ.

ಈ ಕಥಾ ಸಂಕಲನದ ಕಥಾ ನಿರೂಪಣೆ ಕೆಲವೆಡೆ ಸರಳವಾಗಿರಬಹುದಿತ್ತು. ಹಿಂದು-ಮುಂದಿಲ್ಲದೆ ಏಕಾಏಕಿ ಇಬ್ಬರ ನಡುವಿನ ಸಂಭಾಷಣೆಯೊಂದಿಗೆ ಶುರುವಾಗುವ ಕಥೆ ಓದುಗನಲ್ಲಿ ಗೊಂದಲ ಉಂಟುಮಾಡಬಹುದು. ಸಾರ್ವತ್ರಿಕವಾಗಿ ಹೇಳುವುದಾದರೆ ಓದುಗನನ್ನು ಕಥೆಯ ಆವರಣದೊಳಗೆ ಬರಮಾಡಿಕೊಳ್ಳುವ ಬಗ್ಗೆ ಲೇಖಕರು ಎಚ್ಚರಿಕೆ ವಹಿಸಬೇಕು. ಹೀಗಾಗಿ ಕಥೆಯ ಪ್ರವೇಶ ಸರಾಗವಾಗಿದ್ದಾರೆ ಒಳಿತು. ಕಥೆಯ ನಿರೂಪಕರೇ ಕಥೆಗೆ ಒಂದಿಷ್ಟು ಹಿನ್ನೆಲೆಯನ್ನು ಕೊಟ್ಟು ಪಾತ್ರಗಳನ್ನು ಸಾವಧಾನವಾಗಿ ಪರಿಚಯಿಸಿದರೆ ನಂತರ ಸಂಭಾಷಣೆಯನ್ನು ಗ್ರಹಿಸುವುದಕ್ಕೆ ಸರಾಗವಾಗುತ್ತದೆ ಎಂಬುದು ನನ್ನ ಅನಿಸಿಕೆ. ನಾವೆಲ್ಲಾ ಹಿಂದೆ ಓದಿರುವ ಜನಪ್ರಿಯ ಕಥೆ ಕಾದಂಬರಿಯಲ್ಲಿ ಕಥಾ ವಸ್ತುವನ್ನು ಫ್ಲಾಶ್ ಬ್ಯಾಕ್ ಮಾದರಿಯಲ್ಲಿ ಹಿಂದು ಮುಂದೆ ಮಾಡುವ ತಂತ್ರವನ್ನು ನೋಡಿದ್ದೇವೆ. ಇದು ದೃಶ್ಯ ಮಾಧ್ಯಮಗಳಲ್ಲಿ ಗ್ರಹಿಸುವುದು ಸುಲಭ ಆದರೆ ಬರಹದಲ್ಲಿ ಬಳಸಿದಾಗ ಕಥೆಯನ್ನು ಗ್ರಹಿಸುವುದು ಕಷ್ಟದ ಕೆಲಸ. ಈ ತಂತ್ರ ಸಣ್ಣ ಕಥೆಗಳಲ್ಲಿ ಅಷ್ಟು ಪ್ರಯೋಜನಕ್ಕೆ ಬರದಿದ್ದರೂ ಅದನ್ನು ಕಾದಂಬರಿಗಳಲ್ಲಿ ಅಗತ್ಯವಿದ್ದಾಗ ತರಬಹುದು. ಅಂದಹಾಗೆ ಈ ಕೃತಿಯಲ್ಲಿ ಆ ಫ್ಲಾಶ್ ಬ್ಯಾಕ್ ಗಳಿಲ್ಲ.

ಪ್ರೇಮಲತಾ ಬಳೆಸಿರುವ ಭಾಷೆ ಬಹಳ ಉತ್ಕೃಷ್ಟವಾಗಿದೆ. ಅವರಿಗೆ ಕನ್ನಡ ಭಾಷೆಯ ಮೇಲಿರುವ ಹತೋಟಿ ಇಲ್ಲಿ ಎದ್ದು ತೋರುತ್ತದೆ. ಸಂಕೀರ್ಣವಾಗಿರುವ ವೈದ್ಯಕೀಯ ವಿಷಯಗಳನ್ನು ಸರಳಗೊಳಿಸಿ ಕಥೆ ಹೇಳುವ ಸಾಮರ್ಥ್ಯ ಅವರಿಗಿದೆ. ಸಂಬಂಧಗಳು ಎಂಬ ಕೊನೆ ಕಥೆಯಲ್ಲಿ ಮನುಷ್ಯ-ಮನುಷ್ಯ ಸಂಬಂಧಗಳನ್ನು ಕುರಿತಾದ ಕಥಾವಸ್ತು ಇದೆ. ಯಾರು ಯಾರಿಗೆ? ಹೇಗೆ? ಎಲ್ಲಿಯವರೆಗೆ? ಯಾವ ರೀತಿ? ಸಂಬಂಧಿ ಎನ್ನುವ ವಿಚಾರವನ್ನು ಆಳವಾಗಿ ಚಿಂತಿಸಲಾಗಿದೆ. ಸಾವು ಎಂಬ ವಿಷಯವನ್ನು ಅಂತ್ಯಂತ ಸೂಕ್ಷ್ಮವಾಗಿ ನಿಭಾಯಿಸಲಾಗಿದೆ. ಕ್ಯಾನ್ಸರ್ ಪೀಡಿತ ಕಥಾನಾಯಕ ಸಾವನ್ನು ಬರಮಾಡಿಕೊಳ್ಳುವ ಸನ್ನಿವೇಶವನ್ನು ನವುರಾದ ರೂಪಕದೊಂದಿಗೆ ಬಿತ್ತರಿಸಲಾಗಿದ್ದು ಈ ಹಂತದಲ್ಲಿ ಕಥೆ ಮತ್ತು ಕಥಾ ಸಂಕಲನ ಕೊನೆಗೊಳ್ಳುತ್ತದೆ. ಈ ರೀತಿಯ ಉಪಮೆಗಳ ಬಳಕೆ ಇಲ್ಲಿಯ ಕಥೆಗಳಿಗೆ ವಿಶೇಷ ಆಯಾಮಗಳನ್ನು ದೊರಕಿಸಿಕೊಟ್ಟಿದೆ.

ಕಥೆ, ಕಾದಂಬರಿಯನ್ನು ಓದುತ್ತಿರುವಾಗ ಕಥೆಯ ಓಘ, ದಿಕ್ಕು, ಬೆಳವಣಿಗೆ, ಕುತೂಹಲ ಇವುಗಳಲ್ಲಿ ಮಗ್ನರಾಗಿ ಮುಳುಗಿ ಮೇಲೇಳುತ್ತೇವೆ. ಓದು ಮುಗಿದ ನಂತರ ಕೆಲವು ಕಥೆಗಳು ಸರಳ ಕಥೆಗಳಾಗಿ ನೆನಪಿನಿಂದ ಉದುರುತ್ತವೆ. ಇನ್ನು ಕೆಲವು ಕಥೆಗಳು ಹಿನ್ನೋಟದಲ್ಲಿ ಹಲವಾರು ಚಿಂತನೆಗಳಿಗೆ ಅನುವುಮಾಡಿಕೊಡುತ್ತವೆ, ಹೊಸ ಹೊಳಹುಗಳನ್ನು ನೀಡುತ್ತವೆ ಮತ್ತು ನಮ್ಮ ಸ್ಮೃತಿಯಲ್ಲಿ ಧೀರ್ಘ ಕಾಲ ಉಳಿಯುತ್ತವೆ, ಅದರಲ್ಲಿ ಪ್ರೇಮಲತಾ ಅವರ ಈ ಕೃತಿಯೂ ಸೇರಿದೆ.