ಬೆಂಗಳೂರು ನಾಗರತ್ನಮ್ಮ – ರಾಮಮೂರ್ತಿ

ನಮಸ್ಕಾರ ಅನಿವಾಸಿಯ ಬಂಧುಗಳಿಗೆ.  ಶರಣ-ದಾಸ-ಸಂತರ ಸಾಹಿತ್ಯ ಸಂಗೀತದೊಂದಿಗೆ ಆರಂಭವಾಗಿ, ಇತ್ತೀಚೆಗೆ ನಮ್ಮನ್ನಗಲಿದ ಕವಿ ಎಚ್ಚೆಸ್ವಿ ಅವರಿಗೆ ಅರ್ಪಿಸಿದ ನುಡಿನಮನದ ಪುಷ್ಪಗಳ ಪಕ್ಕದಲ್ಲಿ ಹಾಯ್ದು ಬಂದ ನಮ್ಮನ್ನು ಸಂಗೀತದ ಒಬ್ಬ ಕಲಾವಿದೆಯ ಪರಿಚಯಕ್ಕೆ ಕರೆದೊಯ್ಯುತ್ತಿದ್ದಾರೆ, ನಮ್ಮ ಅನಿವಾಸಿ ಬಳಗದ ಇತಿಹಾಸಕಾರ (resident historian) ಶ್ರೀ ರಾಮಮೂರ್ತಿಯವರು. ಅವರಿದ್ದ ಕಾಲಮಾನದಲ್ಲಿ ಬದಲಾವಣೆ ತರಲು, ಒಬ್ಬ ಸಂಗೀತಗಾರ್ತಿಯಾಗಿ ಹೋರಾಡಿ, ಹಲವಾರು ವಿಷಯಗಳಲ್ಲಿ ಮೊದಲಿಗರಾದ ಬೆಂಗಳೂರು ನಾಗರತ್ನಮ್ಮನವರ ಬಗ್ಗೆ ನೋಡೋಣ ಬನ್ನಿ. ಎಂದಿನಂತೆ ಓದಿ ನಿಮ್ಮ ಅಭಿಪ್ರಾಯ ತಿಳಿಸುವುದು. ಧನ್ಯವಾದಗಳೊಂದಿಗೆ - ಲಕ್ಷ್ಮೀನಾರಾಯಣ ಗುಡೂರ್ (ಸಂ.) 
******************************
******************************
ಬೆಂಗಳೂರು ನಾಗರತ್ನಮ್ಮನ ಹೆಸರು ನಿಮಗೆ ಪರಿಚಯ ಇಲ್ಲದಿರಬಹುದು. ಆದರೆ  ಹತ್ತೊಂಬತ್ತನೇ ಶತಮಾನದಲ್ಲಿ ಒಬ್ಬ ದೇವದಾಸಿಯ ಮಗಳಾಗಿ ಬೆಳದು  ಶಾಸ್ತ್ರೀಯ ಸಂಗೀತದಲ್ಲಿ ಹೆಸರು ಮಾಡಿ, ತಿರುವಾಯೂರಿನಲ್ಲಿ ನಡೆಯುವ ಪ್ರಸಿದ್ಧ ತ್ಯಾಗರಾಜ ಆರಾಧನೆಯಲ್ಲಿ ಮಹಿಳಾ ಸಂಗೀತಗಾರರು ಮೊಟ್ಟಮೊದಲಿಗೆ ಭಾಗವಹಿಸುವಂತೆ ಹೋರಾಡಿದವಳು ಈ ಕನ್ನಡತಿ. ಕಾವೇರಿ ನದಿ ದಡದಲ್ಲಿ ತ್ಯಾಗರಾಜರ ಸಮಾಧಿಯ ಮಂಟಪವನ್ನು ಸ್ವಂತ ಖರ್ಚಿನಲ್ಲಿ ಕಟ್ಟಿಸಿದ್ದೇ  ಈಕೆ.  ಗ್ರಾಮೋಫೋನ್  ಆಗ ತಾನೇ , ಅಂದರೆ ೧೯೦೦ ರಲ್ಲಿ , ಬಂದಾಗ ತನ್ನ  ಧ್ವನಿಯನ್ನು ರೆಕಾರ್ಡ್ ಮಾಡಿದ ಆರಂಭಿಕರಲ್ಲಿ ಒಬ್ಬಳು.  

೧೮೭೮ ರ ನವಂಬರ್ ೩ ರಂದು ನಂಜನಗೂಡಿನಲ್ಲಿ ಜನನ; ತಾಯಿ ಪುಟ್ಟ ಲಕ್ಷ್ಮಿ. ಪ್ರಾರಂಭದಲ್ಲಿ ಇವರ ಪೋಷಕ ವಕೀಲ್ ಸುಬ್ಬರಾಯರು. ಆದರೆ, ಬೆಳಸಿದ್ದು ತಾಯಿ ಪುಟ್ಟ ಲಕ್ಷ್ಮಿ. ನಂತರ ಮೈಸೂರಿನಲ್ಲಿ ನೆಲಸಿ ಮೈಸೂರು ಅರಮನೆಯ ಒಬ್ಬ ವಿದ್ವಾಂಸರಿಂದ ಕನ್ನಡ ಮತ್ತು ಸಂಸ್ಕೃತ ಅಧ್ಯಯನ ಕೆಲವು ವರ್ಷ ನಡೆಯಿತು. ಆದರೆ, ಈತ ದೇವದಾಸಿಯ ಮಗಳನ್ನು ಶಿಷ್ಯೆ ಆಗಿ ಮುಂದುವರಿಸಲು ಹಿಂಜರಿದರು, ಬಹುಶಃ ಸಮಾಜದ ಒತ್ತಡದಿಂದಿರಬಹುದು. ನಂತರ ನಾಗರತ್ನಮ್ಮನ ವಿದ್ಯಾಭ್ಯಾಸ ಅವಳ ಸೋದರ ಮಾವ "ಪಿಟೀಲು" ವೆಂಕಟಸ್ವಾಮಿ ಅವರಿಂದ ಮುಂದುವರೆಯಿತು. ನಂತರ, ತ್ಯಾಗರಾಜರ ಶಿಷ್ಯ ಪರಂಪರೆಯ (ಮೂರನೆಯ ಪೀಳಿಗೆ ) ಮುನಿಸ್ವಾಮಿ ಅವರಿಂದ ಸಂಗೀತ ಮತ್ತು ನೃತ್ಯ ಕಲಿಯಲು ಪ್ರಾರಂಭವಾಯಿತು.
ಹೆಸರಾಂತ ಮೈಸೂರು ಆಸ್ಥಾನ ವಿದ್ವಾನ್ ಬಿಡಾರಂ ಕೃಷ್ಣಪ್ಪನವರು ಇವಳ ಪ್ರತಿಭೆಗೆ ಮೆಚ್ಚಿ ನಾಗರತಮ್ಮನನ್ನು ತಮ್ಮ ಶಿಷ್ಯ ವರ್ಗಕ್ಕೆ ಸೇರಿಸಿಕೊಂಡರು. ಇವಳ ಹದಿನೈದನೇ ವಯಸ್ಸಿನಲ್ಲಿ ಮೊದಲ ಕಚೇರಿ (Public Performance ) ಕೊಟ್ಟಾಗ ಮೈಸೂರು ಪ್ರಜೆಗಳಲ್ಲದೆ, ಅಂದಿನ ಮಹಾರಾಜರು ಚಾಮರಾಜ ಒಡೆಯರಿಂದಲೂ ಸಹ ಮೆಚ್ಚುಗೆ ಪಡೆದಳು. ಕೆಲವು ವರ್ಷಗಳ ನಂತರ ಆಸ್ತಾನ ವಿದುಷಿ ಅನ್ನುವ ಮನ್ನಣೆ ಸಹ ಬಂತು. ಈ ಗೌರವ ಪಡೆಯುವುದಕ್ಕೆ ಈಕೆಯೇ ಮೊದಲನೆಯ ಮಹಿಳೆ.
ನಂತರ, ಮೈಸೂರಿನಲ್ಲಿ ಆಗ ಸಾಕಷ್ಟು ಅವಕಾಶಗಳು ಇಲ್ಲದಿರುವ ಕಾರಣದಿಂದ ನಾಗರತ್ನಮ್ಮ ಬೆಂಗಳೂರಿನಲ್ಲಿ ಮನೆ ಮಾಡಿದಳು. ಇಲ್ಲಿ ಅವಳ ಪ್ರತಿಭೆ ಬೇಗ ಹರಡಿ ಅನೇಕ ಗಣ್ಯ ವ್ಯಕ್ತಿಗಳ ಪರಿಚಯವಾಯಿತು. ಮುಖ್ಯವಾಗಿ, ಡಿ ವಿ ಗುಂಡಪ್ಪ , ಜಸ್ಟಿಸ್ ಚಂದ್ರಶೇಖರ್ ಐಯ್ಯರ್ ಮುಂತಾದವರು. ಡಿ ವಿ ಜಿ ಅವರ "ಜ್ಞಾಪಕ ಚಿತ್ರಶಾಲೆ"ಯಲ್ಲಿ ಇವಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ೧೯೦೮/೯ ರಲ್ಲಿ ಇವರು ಚಿಕ್ಕಪೇಟೆಯಲ್ಲಿ ಸಹೂಜಿ ಅನ್ನುವರ ಮನೆಯಲ್ಲಿ ನಡೆಯುತ್ತಿದ್ದ ಸಂಗೀತ ಕಚೇರಿಗೆ ಹೋಗುತ್ತಿದ್ದರಂತೆ. ಇವರಿಬ್ಬರ ಸ್ನೇಹ ಬಹಳ ವರ್ಷ ಮುಂದುವರೆಯಿತು. ಇನ್ನೊಂದು ಸ್ವಾರಸ್ಯವಾದ ಸಂಗತಿ ಇಲ್ಲಿ ಹೇಳಬೇಕು. ನಾಗರತ್ನಮ್ಮನ ಅಭಿಮಾನಿಗಳಲ್ಲಿ ಹೈಕೋರ್ಟಿನ ಜಸ್ಟಿಸ್ ನರಹರಿ ರಾಯರೂ ಒಬ್ಬರಾಗಿದ್ದರು. ಆಗಾಗ್ಯೆ ಕೋರ್ಟ್ ಮುಗಿದ ಮೇಲೆ ತಮ್ಮ ಅಧಿಕೃತ ಗಾಡಿಯಲ್ಲಿ (Official Vehicle) ಚಿಕ್ಕಪೇಟೆಗೆ ಬಂದು ನಾಗರತ್ನಮ್ಮ ನ ಸಂಗೀತ ವನ್ನು ಕೇಳುತ್ತಿದ್ದರು. ನಂತರ ಸ್ನೇಹವೂ ಹೆಚ್ಚಾಯಿತು. ಈ ಸ್ನೇಹ ಮುಂದುವರೆದಾಗ ನರಹರಿ ರಾಯರು ತಮ್ಮ ಪತ್ನಿಯ ಮುಂದೆ ಇದರ ವಿಚಾರ ಹೇಳಿ ಅವರ ಅನುಮತಿ ಕೇಳಿದರಂತೆ. ಏನಾದರೂ ಆಕ್ಷೇಪಣೆ ಇದ್ದರೆ ನಾಗರತ್ನಮ್ಮನ ಸ್ನೇಹವನ್ನು ಮುಂದೆ ಬೆಳುಸುವುದಿಲ್ಲ ಅಂದರಂತೆ. ಪತ್ನಿಯಿಂದ ಅನುಮತಿ ಪಡೆದ ಮೇಲೆ ಇವರ ಸ್ನೇಹ ಇನ್ನೂ ಮುಂದೆವರಿಯಿತು. ಈ ಸಂಭಾಷಣೆಯ ವಿವರವನ್ನು ಡಿ.ವಿ.ಜಿ.ಬರೆದಿದ್ದಾರೆ.

ನಿಮಗೆ ಬೆಂಗಳೂರಿನ ಬಸವನಗುಡಿಯ ನರಹರಿ ಗುಡ್ಡ ಮತ್ತು Mount Joy ಹೆಸರು ಪರಿಚಿತ ಇದ್ದರೆ ಅದರ ಹಿನ್ನೆಲೆ ಇಲ್ಲಿದೆ. ನರಹರಿ ರಾಯರ ಗಾಡಿ ಆಗಾಗ್ಯೆ ಚಿಕ್ಕ ಪೇಟೆಯಲ್ಲಿ ಬಂದು ನಿಲ್ಲುತ್ತಿದ್ದುದು ಜನರಿಗೆ ಸಂಶಯ ಬಂದು ಅನೇಕ ವದಂತಿಗಳು ಶುರುವಾದವು. ಈ ವಿಚಾರ ಅಂದಿನ ದಿವಾನ್ ಶೇಷಾದ್ರಿ ಐಯ್ಯರ್ ಅವರ ಕಿವಿಗೆ ಬಿದ್ದಾಗ, ರಾಜ್ಯದ ಉನ್ನತ ಪದವಿಯಲ್ಲಿರುವ ಒಬ್ಬ ಹೈ ಕೋರ್ಟ್ ನ್ಯಾಯಾಧೀಶನಿಗೆ ಕೆಟ್ಟ ಹೆಸರು ಬರಬಾರದು ಅನ್ನುವ ಉದ್ದೇಶದಿಂದ ದಿವಾನರು, ಗುಟ್ಟಾಗಿ ನರಹರಿ ರಾಯರನ್ನು ಭೇಟಿಮಾಡಿ ಈ ವದಂತಿಗಳ ಬಗ್ಗೆ ಪ್ರಸ್ತಾಪಿಸಿದರಂತೆ. ನಂತರ ನರಹರಿರಾಯರು, ನಾಗರತ್ನಮ್ಮನ ಸಂಗೀತವನ್ನು ಖಾಸಗಿಯಾಗಿ (in private ) ಕೇಳುವುದಕ್ಕೆ ಒಂದು ಮನೆಯನ್ನು ಗುಡ್ಡದ ಮೇಲೆ ಕಟ್ಟಿ ಅದನ್ನು Mount Joy ಅಂತ ಹೆಸರಿಟ್ಟರು. ಈಗ ನರಹರಿ ಗುಡ್ಡ ಮತ್ತು ಇಲ್ಲಿಗೆ ಹೋಗುವ ರಸ್ತೆ, ಹಣಮಂತನಗರದಲ್ಲಿ, Mount Joy ರಸ್ತೆ.
ಶಾಸ್ತ್ರೀಯ ಸಂಗೀತಕ್ಕೆ ಬಹಳ ವರ್ಷಗಳಿಂದ ಈಗಿನ ಚೆನ್ನೈ (Madras) ನಲ್ಲಿ ಪ್ರಾಮುಖ್ಯತೆ ಇದೆ. ಈ ಕಾರಣದಿಂದ ನಾಗರತ್ನಮ್ಮ, ನರಹರಿರಾಯರ ಸಲಹೆಯ ಮೇಲೆ ಮದ್ರಾಸಿನಲ್ಲಿ ನೆಲಸುವುದಕ್ಕೆ ನಿರ್ಧಾರ ಮಾಡಿದಳು. ಅಲ್ಲಿ ಮೊದಲಿಯಾರ್ ಪಂಗಡದವರಿಂದ ಆಶ್ರಯ ಪಡೆದು ಬಹಳ ಬೇಗ ಒಬ್ಬ ಹೆಸರಾಂತ ಸಂಗೀತಗಾರಳಾದಳು. ೧೯೦೫ ರಿಂದ ಅಲ್ಲಿರುವ ಸಂಗೀತ ಸಭೆಗಳಲ್ಲಿ ಭಾಗವಹಿಸಿ ಯಶಸ್ಸನ್ನು ಕಂಡಳು. ಆ ಕಾಲದಲ್ಲೇ ವರಮಾನ ತೆರಿಗೆ (Income tax) ಕೊಡುವಷ್ಟು ಹಣ ಸಂಪಾದನೆ ಇತ್ತು. ಆಗಿನ ಕಾಲದಲ್ಲಿ , ದೇವದಾಸಿ ಪಂಗಡದಲ್ಲಿ ಇರಲಿ, ಯಾವುದೇ ಮಹಿಳೆಯರಲ್ಲಿ ಈ ತೆರಿಗೆ ಕೊಡುತ್ತಿದ್ದವರು ಬಹಳ ವಿರಳ. ನಾಗರತ್ನಮ್ಮ ಒಂದು ಭವ್ಯವಾದ ಮನೆಯನ್ನು ಕಟ್ಟಿ ಅದರ ಗೃಹ ಪ್ರವೇಶಕ್ಕೆ ಮೈಸೂರು ಬಿಡಾರಂ ಕೃಷ್ಣಪ್ಪನವರವನ್ನು ಆಹ್ವಾನಿಸಿದ್ದಳು. ಪುರಂದರ ದಾಸರ ದೇವರನಾಮಗಳನ್ನು ಮದ್ರಾಸಿನಲ್ಲಿ ಮೊದಲಿಗೆ ಕೇಳಿದ್ದು ಇವರಿಂದ ಎಂದು ಅನೇಕರು ಪ್ರಶಂಸಿದರು.

ತ್ಯಾಗರಾಜರ ಕೃತಿಗಳನ್ನು ಹಾಡುವುದು ಇವಳ ವಿಶೇಷತೆ ಆಗಿತ್ತು. ತ್ಯಾಗರಾಜರ ಸಮಾಧಿ ತಿರುವಾಯೂರಿನಲ್ಲಿ ನಿರ್ಲಕ್ಷ ಸ್ಥಿತಿಯಲ್ಲಿ ಇರುವ ವಿಷಯ ಅವಳ ಗುರು ಬಿಡಾರಂ ಕೃಷ್ಣಪ್ಪ ನವರಿಂದ ತಿಳಿಯುತು. ಅಲ್ಲಿಯವರೆಗೆ ಈ ಸಮಾದ್ಜಿ ಬಗ್ಗೆ ಏನೂ ಮಾಹಿತಿ ಇರಲಿಲ್ಲ. ಈಗ ಈ ಸಮಾಧಿಯನ್ನು ನವೀಕರಿಸುವುದನ್ನು ತನ್ನ ಜೀವನ ಧ್ಯೇಯವನ್ನಾಗಿಸಿಕೊಂಡಳು. ತಿರುವಾಯೂರಿಗೆ ಬಂದು ಸಮಾಧಿಯನ್ನು ಗುರುತಿಸಿ ಅಲ್ಲಿ ಒಂದು ಮಂದಿರವನ್ನು ಕಟ್ಟುವುದಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡಿದಳು. ಮದ್ರಾಸಿನಲ್ಲಿದ್ದ ಮನೆ ಮತ್ತು ಬಳಿ ಇದ್ದ ಒಡವೆಗಳನ್ನು ಮಾರಿ ಬಂದ ಹಣದಿಂದ ಈ ಕಟ್ಟಡದ ನಿರ್ಮಾಣ ೨೭/೧೦/೧೯೨೧ ರಲ್ಲಿ ಪ್ರಾರಂಭವಾಗಿ ೭/೦೧/೧೯೨೫ ರಲ್ಲಿ ಪೂರ್ಣಗೊಂಡಿತು. ನಂತರ, ಅನೇಕರ ಸಹಾಯದಿಂದ, ತಿರುವಾಯೂರಿನಲ್ಲಿ ಮೈಸೂರು ಛತ್ರವನ್ನೂ ಕಟ್ಟಿದಳು.

೧೮೪೭ರಲ್ಲಿ ತ್ಯಾಗರಾಜರು ತೀರಿಹೋದ ಹಲವಾರು ವರ್ಷಗಳ ನಂತರ ಕೆಲವು ಸಂಗೀತಗಾರರು ಅಲ್ಲಿ ತ್ಯಾಗರಾಜರ ಕೀರ್ತನೆಗಳನ್ನು ಹಾಡುತ್ತಿದ್ದರು. ಆದರೆ ಮಹಿಳೆಯರಿಗೆ ಪ್ರವೇಶ ಇರಲಿಲ್ಲ. ಸ್ವಂತ ಖರ್ಚಿನಲ್ಲಿ ಮಂದಿರ ನಿರ್ಮಾಣ ಮಾಡಿದ ಮೇಲೂ ಸಹ ನಾಗರತ್ನಮ್ಮನಿಗೆ ಇವರ ಜೊತೆಯಲ್ಲಿ ಹಾಡುವುದಕ್ಕೆ ಅವಕಾಶ ಸಿಗಲಿಲ್ಲ. ನಂತರ ೧೯೨೭ ಜನವರಿ ತಿಂಗಳಲ್ಲಿ ಮಹಿಳೆಯರದ್ದೇ ಒಂದು ಗುಂಪು ಮಾಡಿಕೊಂಡು, ಇದರಲ್ಲಿ ಅನೇಕರು ದೇವದಾಸಿಯರು, ಮಂದಿರದ ಆವರಣದಲ್ಲಿ ತ್ಯಾಗರಾಜರ ಪಂಚರತ್ನ ಕೀರ್ತನೆಗಳನ್ನು ಹಾಡಲು ಪ್ರಾರಂಭಿಸಿದರು. ನಂತರ ಎರಡೂ ಪಂಗಡಗಳು ಸೇರಿ ಒಪ್ಪಂದಕ್ಕೆ ಬಂದು ಈ ಆರಾಧನೆ ಒಂದಾಗಿ, ಇಂದು ಈ ಆರಾಧನೆ ಉನ್ನತ ಮಟ್ಟಕ್ಕೆ ಏರಿದೆ. ನೂರಾರು ಪ್ರಸಿದ್ಧ ಗಾಯಕರು ಅಲ್ಲಿ ಸೇರಿ ಸಾವಿರಾರು ಪ್ರೇಕ್ಷಕರ ಮುಂದೆ ಪಂಚರತ್ನ ಕೀರ್ತನೆಗಳನ್ನು ಹಾಡುವುದನ್ನ ನೋಡುವುದು ಒಂದು ಅದ್ಭುತ ದೃಶ್ಯ. ತ್ಯಾಗರಾಜರ ಆರಾಧನೆ ಪ್ರತಿ ವರ್ಷ ಜನವರಿ ತಿಂಗಳಲ್ಲಿ ನಡೆಯುತ್ತದೆ.

ಹದಿನೆಂಟನೇ ಶತಮಾನದ ಒಬ್ಬ ದೇವದಾಸಿ ಪಂಗಡದ ತೆಲಗು ಕವಿ ಮುದ್ದುಪಲನಿ ( ೧೭೩೦-೧೭೯೦) ರಚಿಸಿದ "ರಾಧಿಕಾ ಸಂತ್ವನಂ" ನಾಗರತ್ನಮ್ಮನ ಗಮನಕ್ಕೆ ಬಂತು. ಇದರಲ್ಲಿ ರಾಧೆಯ ದೈಹಿಕ ಬಯಕೆಯ ಪ್ರಸ್ತಾವನೆ ಇತ್ತು. ಆದರೆ ೧೮೮೭ ರಲ್ಲಿ ಪ್ರಕಟಿಸಿದ ಭಾಷಾಂತರದಲ್ಲಿ "ರಸವತ್ತವಾದ" ವರ್ಣನೆಗಳನ್ನು ತೆಗೆದುಹಾಕಿದ್ದಲ್ಲದೇ, ಮುದ್ದುಪಲನಿ ಪ್ರತಾಪಸಿಂಹನ ಆಸ್ಥಾನದಲ್ಲಿ ಕವಿಯಾಗಿದ್ದಳು ಅನ್ನುವ ವಿಚಾರವನ್ನು ಸಹ ಬರೆದಿರಿಲಿಲ್ಲ. ಕಾರಣ ಬ್ರಿಟಿಷರ "Victorian Values" ಮತ್ತು "ಕೀಳು ದರ್ಜೆಯ" ದೇವದಾಸಿ ಬರೆದ ರಸವತ್ತಾದ ಕವಿತೆಗಳನ್ನು ಪ್ರಕಟಿಸುವುದು ಸಮಾಜದ ದೃಷ್ಟಿಯಲ್ಲಿ ಸರಿಯಲ್ಲ ಅನ್ನುವ ಊಹೆ ಕೆಲವರಿಗಿತ್ತು. ಉದಾಹರಣೆಗೆ ಇಂಗ್ಲೆಂಡ್ನಲ್ಲಿ ೧೯೨೮ರಲ್ಲಿ DH Lawrence ಬರೆದ Lady Chatterley's Lover ಪುಸ್ತಕ ನಿಷೇಧಿತವಾಗಿತ್ತು. ಎರಡು ಆವೃತ್ತಿಗಳನ್ನೂ ಓದಿ ನಾಗರತ್ನಮ್ಮನಿಗೆ ಅಸಮಾಧಾನವಾಗಿ ಮುದ್ದುಪಲನಿಯ ಮೂಲ ರಾಧಿಕಾ ಸಂತ್ವನಂ ಅನ್ನು ೧೯೧೦ ರಲ್ಲಿ Ramaswamy & Sons ಎಂಬ ಪ್ರಕಾಶಕರಿಂದ ಪ್ರಕಟಣೆ ಮಾಡಿಸಿದಳು. ಆದರೆ ಅನೇಕ ಸಂಪ್ರದಾಯವಾದಿ ವಿದ್ವಾಂಸರು ಇದನ್ನು ಪ್ರತಿಭಟಿಸಿ, ಮುದ್ದುಪಲನಿ ಒಬ್ಬ ವೈಶ್ಯೆ, ಅಂತಹ ಕೀಳು ದರ್ಜೆಯ ಮಹಿಳೆ ಬರೆದಿರುವುದನ್ನು ಜನರು ಓದಬಾರದು ಎಂದು ಹೇಳಿ ಸರ್ಕಾರ ಇದನ್ನು ಬಹಿಷ್ಕಾರ ಮಾಡಬೇಕು ಅನ್ನುವ ಒತ್ತಡ ತಂದರು. ನಾಗರತ್ನಮ್ಮ ಮತ್ತು ದೇವದಾಸಿ ಪಂಗಡದವರು ಒಬ್ಬ ದೇವದಾಸಿ ಮಹಿಳೆ ಇದನ್ನು ಬರೆದ್ದರಿಂದ ಪ್ರತಿಭಟನೆ ಮಾಡುತ್ತೀರ ಎಂದು ವಾದಿಸಿದರು. ಆದರೆ ಸರ್ಕಾರ ಇದನ್ನು ಒಪ್ಪಲಿಲ್ಲ. ೧೯೧೧ ರಲ್ಲಿ ಪೊಲೀಸ್ ಅಧಿಕಾರಿಗಳು, ಐಪಿಸಿ ೨೯೨ ಕಾನೂನಿನ ಪ್ರಕಾರ ಈ ಪುಸ್ತಕದ ವ್ಯಾಪಾರ ನಿಲ್ಲಿಸುವುದಕ್ಕೆ ಆಜ್ಞೆ ಮಾಡಿ ಮಾರಾಟಕ್ಕಿದ್ದ ಪುಸ್ತಕಗಳನ್ನು ವಶ ಮಾಡಿಕೊಂಡರು. ೧೯೪೭ರ ನಂತರ ಈ ಪುಸ್ತಕ ನಿಷೇಧವನ್ನು ರದ್ದು ಮಾಡಲಾಯಿತು.

ಇಪ್ಪತ್ತನೇ ಶತಮಾನದ ಮೊದಲಿನಲ್ಲಿ ಅಂದಿನ ಬ್ರಿಟಿಷ್ ಸರ್ಕಾರ ಮತ್ತು ಕೆಲವು ಹಿಂದು ಪಂಗಡದವರಿಂದ ದೇವದಾಸಿಯರು ವೇಶ್ಯೆಯರು, ಇವರಿಂದ ಸಮಾಜಕ್ಕೆ ಹಾನಿ ಎಂದು ಇವರ ಪದ್ದತಿಗಳನ್ನು ನಿಲ್ಲಿಸಬೇಕೆಂದು ಪ್ರಯತ್ನ ಪಟ್ಟರು. ನಾಗರತ್ನಮ್ಮ ಇದನ್ನು ಪ್ರತಿಭಟಿಸಿ ತಮ್ಮದೇ ಸಂಘವನ್ನು (Union )ಕಟ್ಟಿ ಅದರ ಅಧ್ಯಕ್ಸಳಾಗಿ ಅವರ ಹಕ್ಕುಗಳಿಗಾಗಿ ಹೋರಾಡಿದಳು.
೧೯೨೭ರಲ್ಲಿ ತಮ್ಮ ಹಕ್ಕುಗಳನ್ನು ಕಾಪಾಡುವುದಕ್ಕೆ ಇಂಗ್ಲಿಷ್ ನಲ್ಲಿ ಬರೆದ "A Humble Memorandum of Devadasis" ಅನ್ನುವ ಪತ್ರವನ್ನು ಸರ್ಕಾರಕ್ಕೆ ಕೊಟ್ಟು ತನ್ನ ಪಂಗಡದವರ ಮಾನವ ಹಕ್ಕುಗಳನ್ನು ( Human Rights ) ಕಾಪಾಡಿ ಎಂದು ಮನವಿ ಮಾಡಿಕೊಂಡಳು.
ಅವಳ ಕೊನೆಕಾಲದಲ್ಲಿ ಡಿ.ವಿ.ಜಿ. ಇವಳನ್ನು ಭೇಟಿಮಾಡಿ ಆರೋಗ್ಯವನ್ನು ವಿಚಾರಿಸಿದರು. ಈ ಸಂಭಾಷಣೆಯನ್ನು ಡಿ.ವಿ.ಜಿ. ಹೀಗೆ ಬರೆದಿದ್ದಾರೆ:
"ನಾನು ಹುಟ್ಟಿದಾಗ ನಾಗರತ್ನ, ನಂತರ ಭೋಗರತ್ನ ಆದರೆ ಈಗ ರೋಗರತ್ನ" ಅಂತ ನಾಗರತ್ನಮ್ಮ ಹೇಳಿದ್ದಕ್ಕೆ, ಡಿ.ವಿ.ಜಿ. ಹೇಳಿದರಂತೆ - "ನೀನು ಇನ್ನೆರಡು ರತ್ನಗಳನ್ನು ಮರೆತೆ; ಒಂದು ರಾಗರತ್ನ ಮತ್ತು ತ್ಯಾಗರತ್ನ"
ಇದನ್ನು ಯಾರಿಗೂ ಹೇಳಬೇಡಿ ಅಂದಳಂತೆ ನಾಗರತ್ನಮ್ಮ!
ಈಕೆ ಒಬ್ಬ ಮಹಿಳೆಯರ ಹಕ್ಕುಗಳಿಗೆ ಹೋರಾಡಿದ ಮತ್ತು ಸಮಾಜದಲ್ಲಿ ಎಲ್ಲರಿಗೂ ಸಮಾನ ಹಕ್ಕುಗಳಿವೆ ಎಂದನ್ನು ಪ್ರತಿಪಾದಿಸಿದ ಕನ್ನಡತಿ ಮತ್ತು ಕ್ರಾಂತಿಕಾರಿಣಿ.
ನಾಗರತ್ನಮ್ಮ ೧೯/೫/೧೯೫೨ ರಂದು ತನ್ನ ೭೩ರನೇ ವಯಸ್ಸಿನಲ್ಲಿ ತಿರುವಾಯೂರಿನಲ್ಲಿ ನಿಧನಳಾದಳು. ತ್ಯಾಗರಾಜರ ಸಮಾಧಿ ಪಕ್ಕದಲ್ಲೇ ಇವಳ ಸ್ಮಾರಕವನ್ನು ನಿರ್ಮಿಸಲಾಗಿದೆ.

ಈಕೆಯ ಜೀವನ ಚರಿತ್ರೆ ಬಗ್ಗೆ ಬೆಂಗಳೂರಿನ ರಂಗಶಂಕರದಲ್ಲಿ ನಾಗಾಭರಣರ ನಿರ್ದೇಶದಲ್ಲಿ ಒಂದು ನಾಟಕ ಪ್ರದರ್ಶನ ನಡೆಯಿಲಿದೆ.
ರಾಮಮೂರ್ತಿ
ಕಾಂಗಲ್ಟನ್ , ಚೆಶೈರ್
******************************
******************************

ಪ್ರೇಮಲತಾಅವರ ‘ನಂಬಿಕೆಯೆಂಬ ಗಾಳಿಕೊಡೆ’ ಕಥಾಸಂಕಲನ – ಕೆಲವುಅನಿಸಿಕೆಗಳು

ಡಾ.ಜಿ.ಎಸ್.ಶಿವಪ್ರಸಾದ್

ಪ್ರೇಮಲತಾ ಅವರ 'ನಂಬಿಕೆಯೆಂಬ ಗಾಳಿಕೊಡೆ'  ಕಥಾ ಸಂಕಲನವನ್ನು ಇತ್ತೀಚಿಗೆ ಓದಿ ಮುಗಿಸಿ ನನ್ನ ಕೆಲವು ಅನಿಸಿಕೆಗಳನ್ನು ಇಲ್ಲಿ ದಾಖಲಿಸಿದ್ದೇನೆ. ಈ ಕೃತಿಯನ್ನು ಈಗಾಗಲೇ ಓದಿರುವವರಿಗೆ ಈ ನನ್ನ ಬರಹ ಹೊಸ ದೃಷ್ಟಿ ಕೋನಗಳನ್ನು ನೀಡಬಹುದು. ಇನ್ನು ಓದಬೇಕು ಎಂಬ ಆಕಾಂಕ್ಷೆ ಉಳ್ಳವರಿಗೆ ಈ ಲೇಖನ ಪ್ರವೇಶ ಪರಿಚಯವನ್ನು ಒದಗಿಸಬಹುದು. ಲೇಖಕ/ಲೇಖಕಿಯರಿಗೆ ತಾವು ಬರೆದ ಕೃತಿಯನ್ನು ಇತರರು ಓದಿದರೆ ಅದರಿಂದ ಉಂಟಾಗುವ ಸಂತಸ ತೃಪ್ತಿ ಒಂದು ಕಡೆಯಾದರೆ, ಆ ಕೃತಿಯನ್ನು ಓದಿ ಅದರ ಬಗ್ಗೆ ಚರ್ಚೆ ನಡೆದಲ್ಲಿ ಅವರಿಗೆ ಸಾರ್ಥಕತೆಯ ಭಾವ ಉಂಟಾಗಬಹುದು. ಒಂದು ಕೃತಿಯ ವಿಷಯ ವಸ್ತು, ಆಳ ಮತ್ತು ವಿಸ್ತಾರಗಳು ಈ ಅಂಶಗಳನ್ನು ನಿರ್ಧರಿಸಬಹುದು.  ಬರಹಗಾರರಿಗೆ ಅದಕ್ಕಿಂತ ಹೆಚ್ಚಿನ ನಿರೀಕ್ಷೆ ಇರಲಾರದು. ಇನ್ನು ಕೆಲವು ಕರ್ತೃಗಳು "ಯಾರು ಕಿವಿ ಮುಚ್ಚಿದರು ನನಗಿಲ್ಲ ಚಿಂತೆ" ಎಂಬ ನಿರ್ಲಿಪ್ತ ನಿಲುವಿನಲ್ಲಿ ತಮ್ಮ ಒಂದು ಆತ್ಮ ತೃಪ್ತಿಗೆ ಬರವಣಿಗೆಯನ್ನು ಮುಂದುವರಿಸಬಹುದು. ಅನಿವಾಸಿ ನೆಲದಲ್ಲಿ ಮೂಡಿ ಬರುವ ಕನ್ನಡ ಕೃತಿಗಳನ್ನು ಇಲ್ಲಿಯ ಓದುಗರು ಓದಿ ಉತ್ತೇಜಿಸುವುದು, ಸಾಧ್ಯವಾದಲ್ಲಿ ಚರ್ಚೆಗೆ ಒಳಪಡಿಸುವುದು ಅಗತ್ಯವಷ್ಟೇ ಅಲ್ಲ, ಅದು ಅನಿವಾಸಿ  ಕನ್ನಡಿಗರ ಜವಾಬ್ದಾರಿಯೂ ಹೌದು. ಇದನ್ನು ನಮ್ಮ ಅನಿವಾಸಿ ದಶಮಾನೋತ್ಸವ ಸಂದರ್ಭದಲ್ಲಿ ಅನುಷ್ಠಾನಕ್ಕೆ ತರಲಾಯಿತು. ಸಮಯೋಚಿತವಾಗಿ ವಾಟ್ಸ್ ಆಪಿನಲ್ಲೂ ಚರ್ಚೆ ಮಾಡುಕೊಳ್ಳುತ್ತ ಬಂದಿದ್ದೇವೆ. ನನ್ನ ಒಂದು ಸಣ್ಣ ಕಾಣಿಕೆ ಈ ಬರಹದ ರೂಪದಲ್ಲಿ ಅಭಿವ್ಯಕ್ತಗೊಂಡಿದೆ. ಇಲ್ಲಿ ಸಣ್ಣಕಥೆಗಳ ಬಗ್ಗೆ ನನ್ನ ಕೆಲವು ಸಾರ್ವತ್ರಿಕ ಅನಿಸಿಕೆಗಳನ್ನು ಬೆಸೆಯಲಾಗಿದೆ. 

ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು, ಹೊಸ ವರ್ಷದಲ್ಲಿ ಇನ್ನೂ ಹೆಚ್ಚಿನ ಹೊಸ ಕೃತಿಗಳು ಹೊರಬಂದು ಸೃಜನಶೀಲತೆ ವಿಜೃಂಭಿಸಲಿ

-ಸಂ
ಪ್ರೇಮಲತಾ ಅವರು ದಶಕಗಳಿಂದ ಸಣ್ಣ ಕಥೆಗಳನ್ನು ಬರೆದು ಸುಧಾ, ಮಯೂರ ಮುಂತಾದ ಸಂಚಿಕೆಗಳಲ್ಲಿ ಪ್ರಕಟಿಸಿದ್ದಾರೆ. ಹಾಗೆ ಮೂರು ಕಥಾಸಂಕಲನಗಳನ್ನು ಈಗಾಗಲೇ ಪ್ರಕಟಿಸಿ ಖ್ಯಾತರಾಗಿದ್ದಾರೆ. ಅವರ ‘ನಂಬಿಕೆಯೆಂಬ ಗಾಳಿಕೊಡೆ’ ಕಥಾ ಸಂಕಲನವು ವೀರಲೋಕ ಪ್ರಕಾಶನದಿಂದ ೨೦೨೩ರಲ್ಲಿ ಲೋಕಾರ್ಪಣೆಗೊಂಡಿದೆ. ಇಲ್ಲಿ ೧೦ ಸಣ್ಣ ಕಥೆಗಳಿವೆ. ಪುಸ್ತಕ ತರಿಸಿಕೊಂಡು ಹಲವಾರು ದಿನಗಳು ಕಳೆದಿದ್ದರೂ ಈಗ ಸಮಯ ಒದಗಿಬಂದು ಇತ್ತೀಚಿಗಷ್ಟೇ ಓದಿ ಮುಗಿಸಿ, ನನ್ನ ಕೆಲವು ಪ್ರಾಮಾಣಿಕ ಅನಿಸಿಕೆಗಳನ್ನು ಹಂಚಿಕೊಂಡಿದ್ದೇನೆ. ಇದೊಂದು ವಿಮರ್ಶೆಯಾಗಿ ಮೂಡಿ ಬಂದಿದ್ದರೆ ಹಾಗೂ ಇರಲಿ. 

ಈ ಸಂಕಲನದ ಶೀರ್ಷಿಕೆ ಮತ್ತು ಮುಖಪುಟ ಇಲ್ಲಿಯ ಕಥೆಗಳ ರೂಪಕದಂತೆ ನಿಂತಿದೆ. ಸ್ವತಃ ಲೇಖಕಿ ತಮ್ಮ ಅರಿಕೆಯಲ್ಲಿ ಪ್ರಸ್ತಾಪಿಸಿರುವಂತೆ "ನಂಬಿಕೆಗಳೇ ಜೀವನಕ್ಕೆ ಆಧಾರ, ಬದುಕೇ ಒಂದು ನಂಬಿಕೆ" ಬದುಕಿನ ಹಲವಾರು ಸನ್ನಿವೇಶಗಳಲ್ಲಿ ಈ ನಂಬಿಕೆ ಎನ್ನುವುದು ಚುಕ್ಕಾಣಿಯಾಗಿ ನಮ್ಮ ದಿಕ್ಕು ದೆಸೆಗಳನ್ನು ಬದಲಾಯಿಸುತ್ತದೆ ಎಂಬ ವಿಚಾರ ಸೋಜಿಗವಾದದ್ದು. ಕ್ರಿಸ್ತ್ಮಸ್ ಸಮಯದಲ್ಲಿ ಒಬ್ಬ ಎಳೆ ಬಾಲಕ ರಾತ್ರಿ ತಾನು ಮಲಗಿದ್ದ ಸಮಯದಲ್ಲಿ ಸ್ಯಾಂಟಕ್ಲೌಸ್ ಬಂದು ತನಗೆ ಉಡುಗೊರೆಯನ್ನು ಕೊಡುತ್ತಾನೆ ಎನ್ನುವ ನಿರೀಕ್ಷೆ ಒಂದು ನಂಬಿಕೆಯಾದರೆ, ಬೆನ್ನಿಗೆ ಬಾಂಬು ಕಟ್ಟಿಕೊಂಡಿರುವ ತರುಣ ಭಯೋತ್ಪಾದಕ ತಾನು ಜಿಹಾದಿನಲ್ಲಿ ಮಡಿದರೆ ಪರಲೋಕದಲ್ಲಿ ಅಪ್ಸರೆಯನ್ನು ಕೂಡಬಹುದು ಎಂಬ ಅವನ ನಿರೀಕ್ಷೆಯೂ ನಂಬಿಕೆಯೇ. ಆದರೆ ಈ ರೀತಿಯ ನಂಬಿಕೆಗಳ ಪರಿಣಾಮಗಳೇನು ಎಂಬುದು ಮುಖ್ಯವಾದ ಪ್ರಶ್ನೆ. ನಂಬಿಕೆ ಮತ್ತು ತರ್ಕ, ವೈಚಾರಿಕತೆ, ವಿಜ್ಞಾನ ಇವುಗಳ ಮುಖ ಮುಖಿಯನ್ನು ಈಗಾಗಲೇ ಹಲವಾರು ಕಥೆ, ಕಾದಂಬರಿ ಮತ್ತು ಸಿನಿಮಾಗಳು ಶೋಧಿಸಿವೆ. ಪ್ರೇಮಲತಾ ಅವರೂ ಈ ವಿಚಾರವನ್ನು ಕೈಗೆತ್ತಿಕೊಂಡಿದ್ದಾರೆ. ಸಂಬಂಧಗಳನ್ನು ಬೆಸೆಯುವುದು ಈ ನಂಬಿಕೆಗಳೇ. ಒಬ್ಬ ಬರಹಗಾರನಿಗೂ ತನ್ನ ಬರಹ ಓದುಗರ ಗ್ರಹಿಕೆಗೆ, ನಿರೀಕ್ಷೆಗೆ ನಿಲುಕಬಹುದು ಎನ್ನುವ ಹಂಬಲವೂ ಈ ನಂಬಿಕೆಯನ್ನು ಆಧರಿಸಿರುತ್ತದೆ. ಈ ಸಂಕಲನದ ಹಲವಾರು ಕಥೆಗಳ ಭೂಮಿಕೆ ಒಂದಲ್ಲ ಒಂದು ರೀತಿ ಆ ನಂಬಿಕೆಗೆ ಸಂಬಂಧಿಸಿದ್ದು.

ಕಥೆ ಹುಟ್ಟುವುದೇ ಜೀವನದ ಅನುಭವಗಳ ಮೇಲೆ. ಅದು ಬರಹಗಾರನ ವೈಯುಕ್ತಿಕ ಜೀವನ ಅನುಭವವಾಗಿರಬಹುದು, ಇಲ್ಲವೇ ಬರಹಗಾರ ಕಂಡು ಕೇಳಿದ ಅನುಭವವಾಗಿರಬಹುದು. ಈ ಅನುಭವ ಸಾಮಾನ್ಯನಿಗೆ ಒಂದು ಸಾಧಾರಣ ಘಟನೆ, ಸನ್ನಿವೇಶದಂತೆ ಕಂಡರೂ ಸೃಜನಶೀಲ ಲೇಖಕ, ಲೇಖಕಿಯರು ತಮ್ಮ ಅಪ್ರತಿಮ ಕಲ್ಪನಾ ಶಕ್ತಿಯಿಂದ ಆ ಘಟನೆಯನ್ನು ಗ್ರಹಿಸಿ ಅದಕ್ಕೆ ರೆಕ್ಕೆ, ಪುಕ್ಕ, ಮಾಂಸ, ಎಲಬುಗಳನ್ನು ಜೋಡಿಸಿ ಒಂದು ಸುಂದರ ಕಲಾಕೃತಿಯನ್ನು ಕಡೆದು ನಿಲ್ಲಿಸುತ್ತಾರೆ. ಆ ಪ್ರತಿಭೆ ಪ್ರೇಮಲತಾ ಅವರಿಗೆ ನಿಜವಾಗಿಯೂ ಪ್ರಾಪ್ತವಾಗಿದೆ.

ಬದುಕಿನ ಪ್ರಸಂಗಗಳ ಚಿತ್ರವೇ ಸಣ್ಣ ಕಥೆಯ ಬುನಾದಿ, ಹೀಗಾಗಿ ಸಣ್ಣ ಕಥೆಗಳಲ್ಲಿ, ಕೆಲವೇ ಪುಟಗಳಲ್ಲಿ ಕಥೆಯನ್ನು ಹೇಳಿ ಮುಗಿಸಬೇಕಾದ ಒತ್ತಡ ಇರುವುದರಿಂದ ಇಲ್ಲಿ ಹೆಚ್ಚು ಪಾತ್ರಗಳನ್ನು ತರಲು ಅವಕಾಶವಿಲ್ಲ ಮತ್ತು ಇಲ್ಲಿ ಪಾತ್ರಗಳನ್ನು ಆಳವಾಗಿ ಪೋಷಿಸಲು ಸಾಧ್ಯವಿಲ್ಲ. ಕಾದಂಬರಿಯಲ್ಲಿ ಈ ನಿರ್ಬಂಧೆನೆಗಳು ಇರುವುದಿಲ್ಲ. ಕಾದಂಬರಿಗಳಲ್ಲಿ ಕಾಣುವ ಆಳ, ವಿಸ್ತಾರಗಳನ್ನು ಸಣ್ಣ ಕಥೆಗಳಲ್ಲಿ ತರಲು ಸಾಧ್ಯವಿಲ್ಲವಾದರೂ ಸಣ್ಣ ಕಥೆಗಳ ಅನುಕೂಲವೆಂದರೆ ಇಲ್ಲಿ ವಿವಿಧ ಸಾಮಾಜಿಕ ವಿಷಯಗಳನ್ನು ಕಥಾವಸ್ತುವಾಗಿ ಬಳಸ ಬಹುದು, ಹೆಚ್ಚು ವಿಚಾರಗಳನ್ನು ಚಿಂತನೆಗೆ ಒಳಪಡಿಸಬಹುದು. ಕಾದಂಬರಿ ಹರಿಯುವ ನದಿಯಾದರೆ, ಸಣ್ಣ ಕಥೆಗಳು ಕೆರೆಗಳಂತೆ.

ಸಣ್ಣ ಕಥೆಗಳು ಒಡ್ಡುವ ಎಲ್ಲ ಮಿತಿಯೊಳಗೂ ಕೂಡ ಪ್ರೇಮಲತಾ ಅವರು ಸನ್ನಿವೇಶಗಳ ಜೊತೆ ಜೊತೆಗೆ ತಮ್ಮ ಕಥಾ ನಾಯಕ ನಾಯಕಿಯರನ್ನು ಪೋಷಿಸಿದ್ದಾರೆ. ಈ ಸಂಕಲನದ "ತೆರವು' ಎಂಬ ಕಥೆಯಲ್ಲಿ ಕರ್ನಾಟಕದ ರಿಯಲ್ ಎಸ್ಟೇಟ್ ಅವ್ಯವಹಾರದಲ್ಲಿ ಸಿಕ್ಕಿಕೊಂಡಿರುವ ದಂಪತಿಗಳ ಸನ್ನಿವೇಶದಲ್ಲಿ ಏನನ್ನೂ ಸಾಧಿಸಲಾರದ ನಾಮರ್ದ ಗಂಡ ಮತ್ತು ಮನೆ-ಮಡದಿಯಾದರೂ ಸಾಕಷ್ಟು ವಿಷಯಗಳನ್ನು ತಿಳಿದುಕೊಂಡು ದಿಟ್ಟತನದಿಂದ ಲ್ಯಾನ್ಡ್ ಮಾಫಿಯಾ ಗೂಂಡಾಗಳನ್ನು ನಿಭಾಯಿಸುವ ಗೀತಾಳ ಪಾತ್ರ ಇದಕ್ಕೆ ಸಾಕ್ಷಿಯಾಗಿದೆ. ತೇಜೇಸ್ವಿಯವರ 'ಕಿರಿಗೂರಿನ ಗೈಯಾಳಿಗಳು' ಕಥೆಯನ್ನು ನೆನಪಿಗೆ ತಂದಿದೆ.

ಅನಿವಾಸಿ ಲೇಖಕರು ತಮ್ಮ ಪರಿಸರದ ನೆಲೆಯಲ್ಲಿ ಘಟಿಸುವ ಕಥೆಗಳನ್ನು ದೂರದ ಕನ್ನಡ ನಾಡಿಗೆ ತಿಳಿಸ ಬೇಕೇ ಅಥವಾ ಅವರು ಎಲ್ಲಿದ್ದರೂ, ಎಂತಿದ್ದರೂ ಕನ್ನಡ ನೆಲೆದ ಕಥೆಗಳನ್ನಷ್ಟೇ ಬರೆಯ ಬೇಕೇ ಎಂಬ ಪ್ರಶ್ನೆ ಮೂಡುವುದು ಸಹಜವೇ. ಇಂಗ್ಲೆಂಡಿನಲ್ಲಿ ನಡೆದ ಕಥೆ ಕನ್ನಡ ಜನಕ್ಕೆ ಸಲ್ಲಬಹುದೇ ಎಂತೆಂಬ ಪ್ರಶ್ನೆ ಅನಿವಾಸಿ ಬರಹಗಾರರನ್ನು ಕಾಡುವುದು ಸಹಜ. ಒಬ್ಬ ಲೇಖಕ ಯಾವ ದೇಶ ಕಾಲಮಾನಗಳಲ್ಲಿದ್ದರೂ ಅದು ಮನುಷ್ಯ ಸಂಬಂಧ, ಸಹಜ ಸ್ವಭಾವಗಳ ವೈರುಧ್ಯ ಮತ್ತು ಮಾನವೀಯ ಮೌಲ್ಯಗಳನ್ನು ಒಳಗೊಂಡಿದ್ದಲ್ಲಿ ಅದು ಎಲ್ಲಾ ದೇಶಕ್ಕೂ ಮತ್ತು ಎಲ್ಲಾ ಕಾಲಕ್ಕೂ ಪ್ರಸ್ತುತವಾಗುತ್ತವೆ. ಈ ಕಾರಣಗಳಿಂದ ನಮಗೆ ರಷ್ಯಾದ ಟಾಲ್ಸ್ಟಾಯ್ ಮತ್ತು ಬಂಗಾಳದ ಟ್ಯಾಗೋರ್ ಬರೆದ ಕಥೆಗಳು ಹತ್ತಿರವಾಗುತ್ತವೆ. ಪ್ರೇಮಲತಾ ಅವರು ಇಂಗ್ಲೆಂಡಿನಲ್ಲಿ ನೆಲೆಸಿರುವ ಕನ್ನಡತಿ. ಅವರ ಪರಿಸರ ಇಂಗ್ಲೆಂಡಿನ ಆಂಗ್ಲ ಸಂಸ್ಕೃತಿಗೆ ಸಂಬಂಧಿಸಿದ್ದಾದರೂ ಅವರು ಬರೆಯುವ ಕಥೆಗಳು ನಮ್ಮ ಕನ್ನಡ ನೆಲದ ಕಥೆಗಳಾಗಿವೆ. ಇಲ್ಲಿ ಕರ್ನಾಟಕ ನಗರಗಳ, ಮಲೆನಾಡಿನ ದಟ್ಟ ಕಾಡುಗಳ, ಕಾರ್ಪೊರೇಟ್ ಕಂಪನಿಗಳ ಕಥೆ ಇವೆ. ಇದಕ್ಕೆ ಹೊರತಾಗಿ 'ದ್ರೋಹ' ಎಂಬ ಕಥೆ ಲಂಡನ್ ಮತ್ತು ಸಿರಿಯಾದಲ್ಲಿ ಸಂಭವಿಸುತ್ತದೆ.

ಇನ್ನೊಂದು ವಿಚಾರ; ಕಥೆ ಯಾವುದೇ ನೆಲದಲ್ಲಿ ಹುಟ್ಟಿಕೊಂಡರೂ ಆ ಕಥನ ಪ್ರಪಂಚದ ಬೇರೆಡೆ ಇನ್ನೊಬ್ಬರ ಕಥೆಯಾಗಿರಬಹುದು. ಮನುಷ್ಯನ ಮೂಲಭೂತ ಸ್ವಭಾವಗಳಿಗೆ ಬಣ್ಣ, ಸಂಸ್ಕೃತಿ, ಗಡಿ ರೇಖೆಗಳ ಹಂಗುಂಟೆ? ಈ ಸಂಕಲನದ ಶೀರ್ಷಿಕೆ ಕಥೆಯಾಗಿರುವ ‘ನಂಬಿಕೆಯೆಂಬ ಗಾಳಿಕೊಡೆ’ಯಲ್ಲಿ ಬೆಂಗಳೂರಿನ ಒಂದು ಖಾಸಗಿ ಆಫೀಸಿನ ಉದ್ಯೋಗಿಯ ಬೀಳ್ಕೊಡುಗೆ ಪಾರ್ಟಿಯಲ್ಲಿ ಲಕ್ಷ್ಮಿ ಎಂಬ ವಿವಾಹಿತ ಮಹಿಳೆಗೆ ಅವಳ ಪಾನೀಯದಲ್ಲಿ ಒಬ್ಬ ಕುಹಕಿ ಕದ್ದು ಮುಚ್ಚಿ ಮಾದಕವಸ್ತುವನ್ನು ಸೇರ್ಪಡಿಸಿ (ಸ್ಪೈಕ್ ಮಾಡಿ) ಅದರ ಪರಿಣಾಮವಾಗಿ ಲಕ್ಷ್ಮಿ ನಶೆಯಲ್ಲಿದ್ದಾಗ ಅವಳನ್ನು ಅತ್ಯಾಚಾರಕ್ಕೆ ಒಳಪಡಿಸುತ್ತಾನೆ. ಲಕ್ಷ್ಮಿಯ ಅತ್ಯಾಚಾರವನ್ನು ನಮ್ಮ ಸಮಾಜ ಹೇಗೆ ಗ್ರಹಿಸುತ್ತದೆ, ನಮ್ಮ ವ್ಯವಸ್ಥೆ ಹೇಗೆ ತನಿಖೆ ನಡೆಸುತ್ತವೆ ಮತ್ತು ನಂಬಿಕೆ ಆಧಾರದ ಮೇಲೆ ಜನರ ನಿರೀಕ್ಷೆ ಯಾವ ಯಾವ ರೂಪಗಳನ್ನು ತಳೆಯುತ್ತದೆ, ತನಗೆ ಅತ್ಯಾಚಾರವಾಗಿದೆ ಎಂದು ಲಕ್ಷ್ಮಿ ಬಹಿರಂಗವಾಗಿ ಒಪ್ಪಿಕೊಂಡು ಸೋಷಿಯಲ್ ಮೀಡಿಯಾಗಳಲ್ಲಿ ಆ ವಿಚಾರವನ್ನು ಹಂಚಿಕೊಂಡದ್ದು ಸರಿಯೇ, ತಪ್ಪೇ? ಎಂಬ ವಿಚಾರಗಳ ಹಿನ್ನೆಲೆಯಲ್ಲಿ ಕಥೆಯನ್ನು ಹೆಣೆಯಲಾಗಿದೆ. ಆಶ್ಚರ್ಯವೆಂದರೆ ಪ್ರೇಮಲತಾ ಈ ಕಥೆಯನ್ನು ಬರೆದು ನಾಲ್ಕು ವರುಷಗಳಾಗಿವೆ, ಬಹುಶಃ ಅದೇ ಸಮಯದಲ್ಲಿ, ಫ್ರಾನ್ಸ್ ದೇಶದಲ್ಲಿ, ಗೆಜೆಲ್ ಪೆಲಿಕೋ ಎಂಬ ಹಿರಿಯ ಮಹಿಳೆಯ ಸ್ವಂತ ಗಂಡನೇ ಅವಳಿಗೆ ಗೊತ್ತಾಗದಂತೆ ಡ್ರಗ್ಸ್ ಕೊಟ್ಟು ನಶೆಯಲ್ಲಿರುವಾಗ ಅವನು ತನ್ನ ಸ್ನೇಹಿತರನ್ನು ಕರೆದು ಅವಳೊಡನೆ ಸಂಭೋಗಿಸಲು ಉತ್ತೇಜಿಸಿದ. ಅದು ಗೆಜೆಲ್ ಮೇಲೆ ನಡೆದ ಅತ್ಯಾಚಾರವೆನ್ನಬಹುದು. ಅಷ್ಟೇ ಅಲ್ಲ ಈ ಅತ್ಯಾಚಾರವನ್ನು ಅವನು ವಿಡಿಯೋ ಮಾಡಿದ್ದು ಈ ವಿಚಾರ ಇತ್ತೀಚಿಗೆ ಬಹಿರಂಗಗೊಂಡು ಅದರ ತನಿಖೆ ನಡೆಯಿತು, ಈ ಸುದ್ದಿ ಬಿಬಿಸಿ ವಾರ್ತೆಯಲ್ಲಿ ಪ್ರಸಾರಗೊಂಡಿತು. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲಾಯಿತು. ನಂಬಿಕೆಯೆಂಬ ಗಾಳಿಕೋಡೆ ಕಥೆಯಲ್ಲೂ ಆಪಾದಿತ, ಲಕ್ಷ್ಮಿ ಮೇಲೆ ನಡೆಸಿದ ಅತ್ಯಾಚಾರವನ್ನು ವಿಡಿಯೋ ಮಾಡಿರುತ್ತಾನೆ. ಇದು ಎಷ್ಟು ಕಾಕತಾಳೀಯವಾಗಿದೆ! ಪ್ರಪಂಚದ ಯಾವುದೋ ಮೂಲೆಯಲ್ಲಿ ಒಬ್ಬ ಕನ್ನಡ ಲೇಖಕಿಯ ಕಲ್ಪನೆಗೆ ದೊರಕಿದ ಕಥೆ, ಇನ್ಯಾವುದೋ ಸಂಸ್ಕೃತಿಯಲ್ಲಿ, ದೇಶದಲ್ಲಿ ಸಂಭವಿಸಿದ ನೈಜ ಘಟನೆಯಾಗಿರುವುದು ಅಚ್ಚರಿಯನ್ನು ಉಂಟುಮಾಡುವಂಥದ್ದು.

ಪ್ರೇಮಲತಾ ಅವರು ಕೈಗೆತ್ತಿಕೊಳ್ಳುವ ಕಥಾವಸ್ತುಗಳು ನಮ್ಮ ನಿಮ್ಮ ಬದುಕಿಗೆ ಬಹಳ ಹತ್ತಿರವಾದದ್ದು. ಅವರ ಕಥೆಗಳಲ್ಲಿ ಪ್ರಾಮಾಣಿಕತೆ ಇದೆ, ಇಲ್ಲಿ ಅಥೆಂಟಿಸಿಟಿ ಇದೆ. ಅವರು ಸಾಮಾಜಿಕ ಸಮಸ್ಯೆಗಳನ್ನು ಅನೇಕ ಸೂಕ್ಷ್ಮ ದೃಷ್ಟಿ ಕೋನಗಳಿಂದ ವಿಶ್ಲೇಷಿಸಿದ್ದಾರೆ, ಇಲ್ಲಿಯ ಕಥೆಗಳು ಹಲವಾರು ಚಿಂತನೆಗಳಿಗೆ ಅನುವು ಮಾಡಿಕೊಡುತ್ತದೆ. ಇಲ್ಲಿ ಅತಿಯಾದ ಭಾವುಕತೆ ಇಲ್ಲ, ಎಲ್ಲ ಸನ್ನಿವೇಶಗಳನ್ನು ಹದವಾಗಿ ನಿರೂಪಿಸಲಾಗಿದೆ. ಇಲ್ಲಿ ಸ್ತ್ರೀ ಭಾವನೆಗಳಷ್ಟೇ ಅಲ್ಲದೆ ಪುರುಷರ ಭಾವನೆಗಳನ್ನು ನಿಭಾಯಿಸಲಾಗಿದೆ. ಇದರ ಉತ್ತಮ ಉದಾಹರಣೆಯನ್ನು 'ಗೊಡ್ಡು' ಎಂಬ ಕಥೆಯಲ್ಲಿ ಕಾಣಬಹುದು. ಸಾಮಾನ್ಯವಾಗಿ ಬಂಜೆತನವೆಂದರೆ ಅದು ಸ್ತ್ರೀಯರಿಗಷ್ಟೇ ಸಂಬಂಧಿಸಿರುವ ವಿಚಾರ ಎಂದು ಸಮಾಜ ನಂಬಿರುತ್ತದೆ. ಮಕ್ಕಳಾಗದ ದಾಂಪತ್ಯದಲ್ಲಿ ಬಹುಪಾಲು ಹೆಂಗಸೇ ಆಪಾದನೆಗೆ ಒಳಗಾಗುವುದನ್ನು ಕಾಣುತ್ತವೆ. ‘ಎಕ್ಸ್ ಎಕ್ಸ್ ವೈ’ (XXY) ಎಂಬ ಗಂಡಸಿನ ಬಂಜೆತನವನ್ನು ಕಥೆಯಲ್ಲಿ ತಂದು ಲೇಖಕಿ ಈ ನಂಬಿಕೆಯನ್ನು ಒಡೆಯುತ್ತಾರೆ. ಕಥಾ ನಾಯಕನಿಗೆ ತನ್ನ ಬಂಜೆ ತನದ ಅರಿವಾದಾಗ ಅವನಿಗೆ ಉಂಟಾಗುವ ಭಾವನೆಗಳ ಏರು ಪೆರುಗಳನ್ನು ಮತ್ತು ತಾನು ನಿಷ್ಪ್ರಯೋಜಕ ಎಂಬ ಮಾನಸಿಕ ತೊಳಲಾಟವನ್ನು ಅತ್ಯಂತ ಮನೋಜ್ಞವಾಗಿ ಸೆರೆ ಹಿಡಿದಿದ್ದಾರೆ. ಸಮಾಜ ತಾನು ನಂಬಿರುವ ಸಾಮಾಜಿಕ "ಸತ್ಯಗಳನ್ನು" ನಂಬಿಕೆಗಳನ್ನು ಒಡೆದು ತೋರಿಸಿದಾಗ ಉಂಟಾಗುವ ಆಘಾತ ಬಹಳ ಆಳವಾದದ್ದು. ಅದು ಸಮಾಜವನ್ನು ತಿದ್ದುವ ಪ್ರಯತ್ನವೂ ಹೌದು. ಈ ಕಾರಣಕ್ಕಾಗಿ ನಮಗೆ ಪ್ರೇಮಲತಾ ಅವರ ಕಥೆಗಳು ಪ್ರಸ್ತುತವಾಗುತ್ತವೆ.

ಸಣ್ಣ ಕಥೆಗಳು ಎಷ್ಟು ಉದ್ದವಾಗಿರಬೇಕು ಎಂಬುದಕ್ಕೆ ಯಾವುದೇ ಅಳತೆಗೋಲುಗಳಿಲ್ಲ. ಹೇಳಿದಷ್ಟೂ ಕಥೆಯೇ. ಪ್ರೇಮಲತಾ ಅವರ ಕಥೆಗಳು ಕೊಂಚ ದೀರ್ಘವೆನಿಸುತ್ತದೆ. ಇವುಗಳ ನಡುವೆ ‘ನಿರ್ವಾತ’ ಎಂಬ ಕಥೆ ನಿಜವಾಗಿಯೂ ಸಣ್ಣ ಕಥೆ ಎನ್ನಬಹುದು. ಕೆಲವೇ ಪುಟಗಳ ಈ ಕಥೆ 'ಇನ್ಸೆಸ್ಟ್' ಕುರಿತಾಗಿದೆ. ಕಥಾನಾಯಕಿಯ ತಂದೆಯೇ ತನ್ನ ಚಿಕ್ಕ ತಾತನಾಗಿರುವ ಕಥೆ ಪರಿಣಾಮಕಾರಿಯಾಗಿದೆ. ಕನ್ನಡದ ಹಿಂದಿನ ಲೇಖಕರು ಸಲಿಂಗಕಾಮ, ವಿಕೃತ ಕಾಮ, ಅತ್ಯಾಚಾರ ಈ ವಿಚಾರಗಳನ್ನು ಮಡಿವಂತಿಕೆಯಿಂದ ಆಯ್ಕೆ ಮಾಡುತ್ತಿರಲಿಲ್ಲ. ಇದು ಸಾಮಾಜಿಕವಾಗಿ ನಿಷಿದ್ಧವಾದ ವಿಷಯವಾಗಿತ್ತು. ಪ್ರೇಮಲತಾ ಅವರು ಈ ರೀತಿಯ ಬಾಹಿರವಾದ ವಿಚಾರಗಳನ್ನು ಮುನ್ನೆಲೆಗೆ ತಂದಿರುವುದು ಶ್ಲಾಘನೀಯ. ಈ ಪ್ರಯತ್ನವನ್ನು ಇತ್ತೀಚಿನ ಇತರ ಲೇಖಕರೂ ಮಾಡುತ್ತಿದ್ದಾರೆ. ಕಥೆ, ಕಾದಂಬರಿ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಈ ರೀತಿ ವಿಷಯಗಳನ್ನು ತರುವುದರಿಂದ ಅದು ಜನ ಸಾಮಾನ್ಯರಲ್ಲಿ ಅರಿವು ಮೂಡಿಸಲು ಸಹಾಯವಾಗುತ್ತದೆ. ಇದರಿಂದ ಸಮಾಜದಲ್ಲಿ ಪರಿವರ್ತನೆ ಆಗಬಹುದು, ಆಗದಿರಬಹುದು, ಆದರೆ ಅರಿವನ್ನು ಹೆಚ್ಚಿಸುವುದು ಲೇಖಕರ ಮತ್ತು ಸಿನಿಮಾ ನಿರ್ದೇಶಕರ ಜವಾಬ್ದಾರಿ.

ಪ್ರೇಮಲತಾ, ತಮ್ಮ ಕಥೆಯಲ್ಲಿ ತಂದಿರುವ ಅನೇಕ ಸ್ತ್ರೀ ಪಾತ್ರಗಳನ್ನು ಸಹಜವಾಗಿ ನಿರೂಪಿಸಿದ್ದಾರೆ. ಇಲ್ಲಿಯ ಬಹುತೇಕ ಕಥೆಗಳಲ್ಲಿ ಸ್ತ್ರೀ ಪಾತ್ರ ಪ್ರಧಾನವಾಗಿರುವಂತೆ ತೋರುತ್ತದೆ. ಇಲ್ಲಿ ಅವಳು ಸತ್ಯಕ್ಕಾಗಿ, ನ್ಯಾಯಕ್ಕಾಗಿ, ಪ್ರೀತಿಗಾಗಿ ಎದ್ದು ನಿಲ್ಲುತ್ತಾಳೆ. ಅತ್ಯಾಚಾರಕ್ಕೆ ಒಳಗಾಗಿ ಹಿಂಸೆಯನ್ನು ಅನುಭವಿಸಿ ತನ್ನ ಹೆಸರಿಗೆ ಒದಗಿದ ಕಳಂಕವನ್ನು ಮುಚ್ಚಿಡದೆ, ಇತರ ಸ್ತ್ರೀಯರ ರಕ್ಷಣೆಗಾಗಿ ತನ್ನ ಅತ್ಯಾಚಾರವನ್ನು ಬಹಿರಂಗಗೊಳಿಸುವ ಧೀಮಂತ ಹೆಣ್ಣಾಗಿ ನಿಲ್ಲುತ್ತಾಳೆ. ಗಂಡು ಮತ್ತು ಹೆಣ್ಣು ಉದ್ಯೋಗಿಗಳಿಗೆ ನೀಡುವ ವೇತನದಲ್ಲಿ ಉಂಟಾಗಿರುವ ತರತಮಗಳಿಗಾಗಿ ಹೋರಾಡಲು ನಿಲ್ಲುತ್ತಾಳೆ. ವಿಚ್ಛೇದನ ಪಡೆದ ಹೆಂಗಸಾದರೂ ತನ್ನ ಭಾವಿ ಪತಿಗೆ ಕ್ಯಾನ್ಸರ್ ರೋಗ ತಟ್ಟಿದ್ದಾಗ ಅವನನ್ನು ಬೆಂಬಲಿಸಿ ನಿಂತು ಸಾಂತ್ವನ ನೀಡುವಷ್ಟು ಉದಾರಿಯಾಗಿರುತ್ತಾಳೆ. ಸಾಂಪ್ರದಾಯ ದೃಷ್ಟಿಕೋನಗಳಲ್ಲಿ ಸ್ತ್ರೀ ಪುರುಷನ ಅಧೀನಳು, ಅಬಲೆ, ಗಂಡನ ನೆರಳಲ್ಲಿ ಜೀವಿಸುವವಳು ಎಂತೆಲ್ಲಾ ನಮ್ಮ ಹಿಂದಿನ ಕಥೆ, ಪುರಾಣ, ಕಾದಂಬರಿ ಮತ್ತು ಸಿನಿಮಾಗಳಲ್ಲಿ ಚಿತ್ರಿಸಲಾಗಿದೆ. ಅದಕ್ಕೆ ವ್ಯತಿರಿಕ್ತವಾಗಿ ಬದಲಾಗುತ್ತಿರುವ ಸಮಾಜದಲ್ಲಿ ಸ್ತ್ರೀಗೆ ತನ್ನದೇ ಅಸ್ತಿತ್ವವಿದೆ, ಅವಳು ತನ್ನ ಸಮಾನ ಹಕ್ಕುಗಳಿಗೆ ನಿಲ್ಲಬಲ್ಲಳು ಎಂಬ ವಿಚಾರವನ್ನು ಇಲ್ಲಿಯ ಕಥೆಗಳಲ್ಲಿ ಕಾಣಬಹುದು. ಜೊತೆಗೆ ಸ್ತ್ರೀ ಒಂದು ಶಕ್ತಿ ಅಷ್ಟೇ ಅಲ್ಲ, ಸ್ನೇಹ, ಪ್ರೀತಿ, ಕರುಣೆ, ಸಹನೆ ಮತ್ತು ಅನುಕಂಪೆಯ ಪ್ರತಿಮೆಯಾಗಿಯೂ ನಿಲ್ಲುತ್ತಾಳೆ.

'ವರ್ತುಲ' ಎಂಬ ಕಥೆ ಬೇರೆ ಕಥೆಗಳಿಗಿಂತ ಭಿನ್ನವಾಗಿ ಎದ್ದು ನಿಲ್ಲುತ್ತದೆ. ಬದುಕೆಂಬ ಸ್ಪರ್ಧೆಯಲ್ಲಿ ನಾವು ಯಶಸ್ಸಿನ ಸಾಧನೆಯಲ್ಲಿ ಸಿಕ್ಕಿಕೊಂಡಿ "ಇರುವುದೆಲ್ಲವ ಬಿಟ್ಟು ಇರದುದರ ಕಡೆ ತುಡಿಯುವ" ನಾಗರೀಕತೆ ಎಂಬ ಖಾಯಿಲೆಯಲ್ಲಿ ನರಳುವವವರ ಚಿತ್ರ ಈ ಕಥೆಯಲ್ಲಿದೆ. ಇಲ್ಲಿ ಪರಿಸರ ನಾಶದ ಬಗ್ಗೆ ಕಾಳಜಿ ಇದೆ. ತೀವ್ರ ಗತಿಯಲ್ಲಿ ಬದಲಾಗಿ ನಿಬಿಡವಾಗಿರುವ ನಗರಗಳ ನಡುವೆ ನಿಡುಸುಯ್ಯುವ ಸ್ವರಗಳ ದನಿಯಿದೆ. "ಹೊಸತಿಗೆ -ಹಳತಿಗೂ, ಒಳ್ಳೆಯದಕ್ಕೂ-ಕೆಟ್ಟದಕ್ಕೂ, ವಿವೇಕಕ್ಕೂ-ಅವಿವೆಕ್ಕಕ್ಕೂ, ಭೂತ-ಭವಿಷ್ಯತ್ತಿಗೂ ಇರುವ ಪರದೆ ಅತಿ ತೆಳುವಾದದ್ದು" ಎಂಬ ಮಾತನ್ನು ಲೇಖಕಿ ಇಲ್ಲಿ ಪ್ರಸ್ತಾಪಿಸುತ್ತಾರೆ. ಈ ಮಾತುಗಳು ಎಲ್ಲರನ್ನು ಕಾಡುವ ವಿಚಾರ. ಹಿಂದೊಮ್ಮೆ ಹಳೆಯದೆಂದು ನಾವೇ ತಿರಸ್ಕರಿಸಿದ ಬದುಕಿನ ರೀತಿಗಳು, ದಿನ ನಿತ್ಯ ಬಳಕೆಯ ವಸ್ತುಗಳು, ಮಣ್ಣಿನ ವಾಸನೆ, ನಿಸರ್ಗದ ತಾಜಾತನ ಕಾಲದ ವರ್ತುಲದಲ್ಲಿ ಕಳೆದು ಹೋಗಿ ಮತ್ತೆ ನಮಗೆ ಅದೇ ಹಳೆತಿನ ಬಗ್ಗೆ ಹೊಸ ವ್ಯಾಮೋಹ ಹುಟ್ಟಿಕೊಳ್ಳುವ ಪರಿ ಸೋಜಿಗವಾದದ್ದು. ಈ ವರ್ತುಲದಲ್ಲಿ ಮೊದಲಾವುದು, ಕೊನೆಯಾವುದು ಎಂಬ ಪ್ರಶ್ನೆ ಕಾಡುತ್ತದೆ. ಪ್ರಗತಿಯ ನೆಪದಲ್ಲಿ ಎಲ್ಲವನ್ನೂ ಕಬಳಿಸುವ ನಮ್ಮ ದುರಾಸೆಯನ್ನು ಪ್ರೇಮಲತಾ ಅವರು "ಹಾವೊಂದು ತನ್ನ ಬಾಲದಿಂದ ಶುರು ಮಾಡಿ ತನ್ನನ್ನು ತಾನೇ ಕಬಳಿಸುವ" ದುರಂತ ಪ್ರಯತ್ನದ ರೂಪಕವನ್ನು ಇಲ್ಲಿ ಇಟ್ಟಿದ್ದು ಅದು ಬಹಳ ಅರ್ಥಪೂರ್ಣವಾಗಿದೆ.

ಈ ಕಥಾ ಸಂಕಲನದ ಕಥಾ ನಿರೂಪಣೆ ಕೆಲವೆಡೆ ಸರಳವಾಗಿರಬಹುದಿತ್ತು. ಹಿಂದು-ಮುಂದಿಲ್ಲದೆ ಏಕಾಏಕಿ ಇಬ್ಬರ ನಡುವಿನ ಸಂಭಾಷಣೆಯೊಂದಿಗೆ ಶುರುವಾಗುವ ಕಥೆ ಓದುಗನಲ್ಲಿ ಗೊಂದಲ ಉಂಟುಮಾಡಬಹುದು. ಸಾರ್ವತ್ರಿಕವಾಗಿ ಹೇಳುವುದಾದರೆ ಓದುಗನನ್ನು ಕಥೆಯ ಆವರಣದೊಳಗೆ ಬರಮಾಡಿಕೊಳ್ಳುವ ಬಗ್ಗೆ ಲೇಖಕರು ಎಚ್ಚರಿಕೆ ವಹಿಸಬೇಕು. ಹೀಗಾಗಿ ಕಥೆಯ ಪ್ರವೇಶ ಸರಾಗವಾಗಿದ್ದಾರೆ ಒಳಿತು. ಕಥೆಯ ನಿರೂಪಕರೇ ಕಥೆಗೆ ಒಂದಿಷ್ಟು ಹಿನ್ನೆಲೆಯನ್ನು ಕೊಟ್ಟು ಪಾತ್ರಗಳನ್ನು ಸಾವಧಾನವಾಗಿ ಪರಿಚಯಿಸಿದರೆ ನಂತರ ಸಂಭಾಷಣೆಯನ್ನು ಗ್ರಹಿಸುವುದಕ್ಕೆ ಸರಾಗವಾಗುತ್ತದೆ ಎಂಬುದು ನನ್ನ ಅನಿಸಿಕೆ. ನಾವೆಲ್ಲಾ ಹಿಂದೆ ಓದಿರುವ ಜನಪ್ರಿಯ ಕಥೆ ಕಾದಂಬರಿಯಲ್ಲಿ ಕಥಾ ವಸ್ತುವನ್ನು ಫ್ಲಾಶ್ ಬ್ಯಾಕ್ ಮಾದರಿಯಲ್ಲಿ ಹಿಂದು ಮುಂದೆ ಮಾಡುವ ತಂತ್ರವನ್ನು ನೋಡಿದ್ದೇವೆ. ಇದು ದೃಶ್ಯ ಮಾಧ್ಯಮಗಳಲ್ಲಿ ಗ್ರಹಿಸುವುದು ಸುಲಭ ಆದರೆ ಬರಹದಲ್ಲಿ ಬಳಸಿದಾಗ ಕಥೆಯನ್ನು ಗ್ರಹಿಸುವುದು ಕಷ್ಟದ ಕೆಲಸ. ಈ ತಂತ್ರ ಸಣ್ಣ ಕಥೆಗಳಲ್ಲಿ ಅಷ್ಟು ಪ್ರಯೋಜನಕ್ಕೆ ಬರದಿದ್ದರೂ ಅದನ್ನು ಕಾದಂಬರಿಗಳಲ್ಲಿ ಅಗತ್ಯವಿದ್ದಾಗ ತರಬಹುದು. ಅಂದಹಾಗೆ ಈ ಕೃತಿಯಲ್ಲಿ ಆ ಫ್ಲಾಶ್ ಬ್ಯಾಕ್ ಗಳಿಲ್ಲ.

ಪ್ರೇಮಲತಾ ಬಳೆಸಿರುವ ಭಾಷೆ ಬಹಳ ಉತ್ಕೃಷ್ಟವಾಗಿದೆ. ಅವರಿಗೆ ಕನ್ನಡ ಭಾಷೆಯ ಮೇಲಿರುವ ಹತೋಟಿ ಇಲ್ಲಿ ಎದ್ದು ತೋರುತ್ತದೆ. ಸಂಕೀರ್ಣವಾಗಿರುವ ವೈದ್ಯಕೀಯ ವಿಷಯಗಳನ್ನು ಸರಳಗೊಳಿಸಿ ಕಥೆ ಹೇಳುವ ಸಾಮರ್ಥ್ಯ ಅವರಿಗಿದೆ. ಸಂಬಂಧಗಳು ಎಂಬ ಕೊನೆ ಕಥೆಯಲ್ಲಿ ಮನುಷ್ಯ-ಮನುಷ್ಯ ಸಂಬಂಧಗಳನ್ನು ಕುರಿತಾದ ಕಥಾವಸ್ತು ಇದೆ. ಯಾರು ಯಾರಿಗೆ? ಹೇಗೆ? ಎಲ್ಲಿಯವರೆಗೆ? ಯಾವ ರೀತಿ? ಸಂಬಂಧಿ ಎನ್ನುವ ವಿಚಾರವನ್ನು ಆಳವಾಗಿ ಚಿಂತಿಸಲಾಗಿದೆ. ಸಾವು ಎಂಬ ವಿಷಯವನ್ನು ಅಂತ್ಯಂತ ಸೂಕ್ಷ್ಮವಾಗಿ ನಿಭಾಯಿಸಲಾಗಿದೆ. ಕ್ಯಾನ್ಸರ್ ಪೀಡಿತ ಕಥಾನಾಯಕ ಸಾವನ್ನು ಬರಮಾಡಿಕೊಳ್ಳುವ ಸನ್ನಿವೇಶವನ್ನು ನವುರಾದ ರೂಪಕದೊಂದಿಗೆ ಬಿತ್ತರಿಸಲಾಗಿದ್ದು ಈ ಹಂತದಲ್ಲಿ ಕಥೆ ಮತ್ತು ಕಥಾ ಸಂಕಲನ ಕೊನೆಗೊಳ್ಳುತ್ತದೆ. ಈ ರೀತಿಯ ಉಪಮೆಗಳ ಬಳಕೆ ಇಲ್ಲಿಯ ಕಥೆಗಳಿಗೆ ವಿಶೇಷ ಆಯಾಮಗಳನ್ನು ದೊರಕಿಸಿಕೊಟ್ಟಿದೆ.

ಕಥೆ, ಕಾದಂಬರಿಯನ್ನು ಓದುತ್ತಿರುವಾಗ ಕಥೆಯ ಓಘ, ದಿಕ್ಕು, ಬೆಳವಣಿಗೆ, ಕುತೂಹಲ ಇವುಗಳಲ್ಲಿ ಮಗ್ನರಾಗಿ ಮುಳುಗಿ ಮೇಲೇಳುತ್ತೇವೆ. ಓದು ಮುಗಿದ ನಂತರ ಕೆಲವು ಕಥೆಗಳು ಸರಳ ಕಥೆಗಳಾಗಿ ನೆನಪಿನಿಂದ ಉದುರುತ್ತವೆ. ಇನ್ನು ಕೆಲವು ಕಥೆಗಳು ಹಿನ್ನೋಟದಲ್ಲಿ ಹಲವಾರು ಚಿಂತನೆಗಳಿಗೆ ಅನುವುಮಾಡಿಕೊಡುತ್ತವೆ, ಹೊಸ ಹೊಳಹುಗಳನ್ನು ನೀಡುತ್ತವೆ ಮತ್ತು ನಮ್ಮ ಸ್ಮೃತಿಯಲ್ಲಿ ಧೀರ್ಘ ಕಾಲ ಉಳಿಯುತ್ತವೆ, ಅದರಲ್ಲಿ ಪ್ರೇಮಲತಾ ಅವರ ಈ ಕೃತಿಯೂ ಸೇರಿದೆ.