ಕೆಹನಾ ಕ್ಯಾ ಚಾಹತೇ ಹೋ?

ಕೆಹನಾ ಕ್ಯಾ ಚಾಹತೇ ಹೋ?

ಈ ವಾರದ ಲೇಖನ ಓದಲು ಕೊಟ್ಟಾಗ ಹೆಂಡತಿಯ ಮೊದಲ ಉದ್ಘಾರ ಇದು. ವಿಜ್ಞಾನ, ದೇವರು, ಧರ್ಮ ಏನೆಲ್ಲಾ ವಿಷಯ ಒಂದೇ ಲೇಖನದಲ್ಲಿ ಹಾಕಿ ಅದನ್ನು ಚಿತ್ರಾನ್ನ ಮಾಡಿದ್ದಿಯ ಎಂದು ತನ್ನ ಅಭಿಪ್ರಾಯ ತಿಳಿಸಿದಳು, ನನ್ನ ಅಣ್ಣನೂ ಹಲವು ಸಲ ನನಗೆ ರಿಸರ್ಚ್ ಲೇಖನ ಬರೆಯುದು ಬಿಟ್ಟು ನಿನ್ನ ವಿಚಾರ ಹಂಚಿಕೊ ಎಂದು ಹೇಳುತ್ತಿರುತ್ತಾನೆ. ನನಗೋ ಓದಿದ ವಿಷಯ, ಕೇಳಿದ ವಿಷಯ ಒಂದೆಡೆ ಸೇರಿಸಿ ಅದನ್ನು ಹದವಾಗಿ ಕಲಿಸಿ, ಉಣಿಸಿದಾಗ ಖುಷಿ ಸಿಗುತ್ತದೆ. ಸಂಕೀರ್ಣ ವಿಷಯ ತಿಳಿಸುವಾಗ ನನ್ನದಷ್ಟೇ ವಿಚಾರಗಳನ್ನು ಹಂಚಿಕೊಳ್ಳದೇ, ಅದನ್ನು ಬೇರೆಯವರು ನೋಡುವ ಪರಿ ಸೇರಿಸಿದಾಗ ಸರಳ ಮಾಡಬಹುದೆಂಬ ಅನಿಸಿಕೆ ನನ್ನದು. ಅಂತಹದೇ ಒಂದು ಪ್ರಯತ್ನ ಇಂದಿನ ಲೇಖನ, ಹದವಾಗಿದೆ ಬೆರಸಿದ್ದೇನೆ ಅಂದುಕೊಳ್ಳುತೇನೆ.

“Science without religion is lame, religion without science is blind”
(Albert Einstein )

ಮೇಲಿನ ಸಾಲುಗಳು ಆಲ್ಬರ್ಟ್ ಐನ್ಸ್ಟೀನ್ ಅವರ ಅಭಿಪ್ರಾಯ, ಇನ್ನೂ ಸ್ಟೀಫನ್ ಹಾಕಿಂಗ್ ಏನು ಹೇಳುತ್ತಾರೆ ನೋಡೋಣ, ಅವರು ತಮ್ಮ ಒಂದು ಸಂದರ್ಶನದಲ್ಲಿ ಹೇಳುತ್ತಾರೆ “ಶತಮಾನಗಳಿಂದ, ನನ್ನಂತಹ ಅಂಗವಿಕಲರು ದೇವರು ಕೊಟ್ಟ ಶಾಪದಿಂದ ಈ ರೀತಿ ಬದುಕುತ್ತಿದ್ದಾರೆ ಎಂದು ನಂಬಲಾಗಿದೆ. ಸರಿ, ನಾನು ಯಾರಿಗಾದರೂ ತಪ್ಪು ಅಥವಾ ಅಸಮಾಧಾನಗೊಳಿಸಿರಬಹುದು ಎಂದು ನಾನು ಭಾವಿಸುತ್ತೇನೆ, ಆದರೆ ಈ ಎಲ್ಲವನ್ನೂ ಪ್ರಕೃತಿಯ ನಿಯಮಗಳಿಂದ ಇನ್ನೊಂದು ರೀತಿಯಲ್ಲಿ ವಿವರಿಸಬಹುದು. ನೀವು ವಿಜ್ಞಾನವನ್ನು ನಂಬಿದರೆ, ಯಾವಾಗಲೂ ಪಾಲಿಸಬೇಕಾದ ಕೆಲವು ನಿಯಮಗಳಿವೆ ಎಂದು ನೀವು ನಂಬುತ್ತೀರಿ. ನೀವು ಬಯಸಿದರೆ, ನಿಯಮಗಳು ದೇವರ ಕೆಲಸ ಎಂದು ನೀವು ಹೇಳಬಹುದು, ಆದರೆ ಅದು ದೇವರ ಅಸ್ತಿತ್ವದ ಪುರಾವೆಗಿಂತ ಹೆಚ್ಚಾಗಿ ಅವನ ವ್ಯಾಖ್ಯಾನವಾಗಿದೆ.”

ಧರ್ಮ, ದೇವರು, ವಿಜ್ಞಾನ, ಈ ವಿಚಾರವಾಗಿ ಹಿಂದಿನಿಂದಲೂ ಜನರ ಭಿನ್ನಾಭಿಪ್ರಾಯ ಅಥವಾ ತಿಕ್ಕಾಟ ನಡೆಯುತ್ತಲೇ ಇದೆ. ಗೆಲಿಲಿಯೋ ಭೂಮಿ ಸೂರ್ಯನ ಸುತ್ತ ತಿರುಗತ್ತದೆ ಎಂದು ಪ್ರತಿಪಾದಿಸಿದಾಗ ಅವನನ್ನು ಗ್ರಹ ಬಂಧನದಲ್ಲಿ ಇರಿಸಿ ಅವನ ಪುಸ್ತಕಗಳ ನಿಷೇದ ಮಾಡಿದ್ದು ಕೆಲವು ಧರ್ಮ ಗುರುಗಳು. ಇಂದಿನ ನನ್ನ ಲೇಖನದಲ್ಲಿ ನಾನು ಧರ್ಮವನ್ನು ಸರಿ ಎಂದು ಅಥವಾ ವಿಜ್ಞಾನ ಸರಿ ಎಂದು ವಾದಿಸುತ್ತಿಲ್ಲ, ವಿಷಯವನ್ನು ಅರಿಯುವ ಒಂದು ಪ್ರಯತ್ನ ಅಷ್ಟೇ. ಕೆಲವು ವಿಚಾರಗಳನ್ನು ಅರಿತು, ಅದನ್ನು ವಿಭಿನ್ನ ರೀತಿಯಲ್ಲಿ ಹೇಗೆ ನೋಡಬಹುದೆಂಬ ಒಂದು ಪ್ರಯತ್ನ.

ಇನ್ನೊಂದು ಉದಾಹರಣೆ “ಹಿಮಾಲಯದ ಮಹಾತ್ಮರ ಸನ್ನಿದಿಯಲ್ಲಿ” ಪುಸ್ತಕದಲ್ಲಿ ಹಲವು ಮಹಾತ್ಮರ ಬಗ್ಗೆ ಉಲ್ಲೇಖವಿದೆ, ಅವರು ತಮ್ಮ ತನು, ಮನ ನಿಯಂತ್ರಣದಿಂದ ಸಾಮಾನ್ಯ ಮನುಷ್ಯನಿಗೆ ಆಗದ ಕಾರ್ಯ ಮಾಡಿದ್ದಾರೆ, ವಯಸ್ಸು ಮತ್ತು ಸಾವನ್ನು ತಮ್ಮ ಹಿಡಿತದಲ್ಲಿ ಇರಿಸಿದ್ದಾರೆ. ಅವರ ದೇಹದ ಹಾಗೂ ಮನಸ್ಸಿನ ನಿಯಂತ್ರಣ ವಿಜ್ಞಾನದಿಂದಲೂ ಸುಲಭವಾಗಿ ವಿವರಿಸಲು ಅಸಾಧ್ಯ. ಆ ಪುಸ್ತಕದಲ್ಲೇ ಇನ್ನೊಂದು ತರಹದ ವ್ಯಕ್ತಿಗಳ ಬಗ್ಗೆ ತಿಳಿಸುತ್ತಾರೆ, ಕೊರಳಿಗೆ ಹಾವನ್ನು ಹಾಕಿಕೊಂಡು ಬಂದು ನಮ್ಮ ಮನದಲ್ಲಿ ನಡೆಯುತ್ತಿರುವ ವಿಚಾರವನ್ನು ಸರಾಗವಾಗಿ ಹೇಳುವ, ಹಣ ಕೇಳುವ ಜನರ ಕಪಟತನದ ಬಗ್ಗೆ. ಮನಸ್ಸನ್ನು ಅರಿಯುವ ಚತುರತೆಯಿಂದ ಇಂತಹ ಜನರು ವಿಜ್ಞಾನವನ್ನು (ದುರು) ಉಪಯೋಗಿಸಿ ನಿಂಬೆ ಹಣ್ಣಿನಲ್ಲಿ ರಕ್ತ ಬರಿಸುವುದು, ಕರ್ಪೂರ ಹೊತ್ತಿ ಉರಿಸುವದು ಮಾಡಿ ಜನರಿಗೆ ಧರ್ಮದ ಹೆಸರಿನಲ್ಲಿ ಮೋಡಿ ಮಾಡುತ್ತಾರೆ.

ವಿಜ್ಞಾನ ಮತ್ತು ಧರ್ಮ ಕೂಡಿಸಲು ಆಗದ ಮತ್ತು ಬಿಡಿಸಲೂ ಆಗದ ಸಂಬಂಧ, ಇದನ್ನು ಸುಂದರವಾಗಿ ಡ್ಯಾನ್ ಬ್ರೌನ್ ತನ್ನ ಪುಸ್ತಕ “ಏಂಜೆಲ್ಸ್ ಅಂಡ್ ಡೆಮಾನ್ಸ್ ” ನಲ್ಲಿ ತೋರಿಸುತ್ತಾನೆ. ಪುಸ್ತಕದ ಕಥೆ ಇರುವದೇ ವಿಜ್ಞಾನ ಮತ್ತು ಧರ್ಮ ಹೊಡೆದಾಟದ ಕುರಿತು, ಆದರೂ ಇದರ ಕೊನೆ ವಿಜ್ಞಾನ ಅಥವಾ ಧರ್ಮ ಸರಿ ಎಂದು ಸಮರ್ಥಿಸಲು ಅಲ್ಲ. ಈ ಪುಸ್ತಕದಲ್ಲಿ ಯುರೋಪಿಯನ್ ನ್ಯೂಕ್ಲಿಯರ್ ರಿಸರ್ಚ್ ಸಂಸ್ಥೆಯ ಒಂದು ವೈಜ್ಞಾನಿಕ ಶೋಧನೆ “Antimatter ” ಬಗ್ಗೆ ಪ್ರಸ್ತಾಪವಿದೆ. ದ್ರವ್ಯ (ಮ್ಯಾಟರ್) ಮತ್ತು ಪ್ರತಿದ್ರವ್ಯ (ಆಂಟಿಮ್ಯಾಟರ್) ಒಂದೇ ಪ್ರತಿರೂಪಗಳು ಆದರೆ ವಿರುದ್ಧ ವಿದ್ಯುದಾಂಶವನ್ನು ಹೊಂದಿರುತ್ತವೆ. ದ್ರವ್ಯ ಮತ್ತು ಪ್ರತಿದ್ರವ್ಯ ಜೊತೆಗೆ ಸಂಪರ್ಕಕ್ಕೆ ಬಂದರೆ, ಶುದ್ಧ ಶಕ್ತಿಯಾಗಿ ನಾಶವಾಗುತ್ತದೆ. ಇನ್ನು ನಾವು ವಾಸಿಸುವ ಭೂಮಿ ದ್ರವ್ಯದಿಂದ ಕೂಡಿದೆ; ಪ್ರತಿ ಒಂದು ಕಣ, ಸ್ಥಳದಲ್ಲಿ ದ್ರವ್ಯ ಇದೆ. ಎಲ್ಲೆಲ್ಲೂ ದೃವ್ಯ ಇದೆ ಎಂದು ಬರೆಯುವಾಗ ಕನಕದಾಸರ ಮತ್ತು ಅವರ ಗುರುಗಳ ಒಂದು ಪ್ರಸಂಗ ನೆನಪು ಬಂತು, ಅದನ್ನು ಓದಿ ಮುಂದುವರೆಯೋಣ,

ಒಂದು ಸಲ, ಏಕಾದಶಿಯ ಉಪವಾಸದ ದಿನ, ವ್ಯಾಸರಾಜರು ತಮ್ಮ ಎಲ್ಲ ವಿದ್ಯಾರ್ಥಿಗಳನ್ನು ಕರೆದು, ‘ನಾನು ನಿಮಗೆ ಒಬ್ಬೊಬ್ಬರಿಗೂ ಒಂದೊಂದು ಬಾಳೆಹಣ್ಣು ನೀಡುತ್ತಿದ್ದೇನೆ, ಯಾರೂ ನಿಮ್ಮನ್ನು ನೋಡದ ಸ್ಥಳವನ್ನು ನೀವು ಕಂಡುಕೊಂಡರೆ ನೀವು ಅದನ್ನು ತಿನ್ನಬಹುದು’ ಎಂದು ಹೇಳಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಬಾಳೆಹಣ್ಣನ್ನು ತೆಗೆದುಕೊಂಡು ರಹಸ್ಯ ಸ್ಥಳಗಳನ್ನು ಹುಡುಕಲು ಪ್ರಾರಂಭಿಸಿದರು. ಸಂಜೆ ಗುರು ವ್ಯಾಸತೀರ್ಥರು ಪಾಠದ ನಂತರ ಅವರು ತಮ್ಮ ಬಾಳೆಹಣ್ಣುಗಳನ್ನು ಎಲ್ಲಿ ಮತ್ತು ಹೇಗೆ ತಿಂದರು ಎಂದು ಕೇಳಿದರು. ಕೆಲವರು ಅವರು ಕತ್ತಲೆಯ ಮೂಲೆಗೆ ಹೋದರು, ಇತರರು ಮರದ ಹಿಂದೆ ಅಡಗಿಕೊಂಡರು ಅಥವಾ ಕಾಡಿಗೆ ಹೋಗಿದ್ದಾರೆ ಎಂದು ಹೇಳಿದರು. ಕನಕ ದಾಸರ ಸರದಿ ಬಂದಾಗ, ಅವರು ತಮ್ಮ ತಿನ್ನದ ಬಾಳೆಹಣ್ಣನ್ನು ತೋರಿಸಿ, ‘ಕ್ಷಮಿಸಿ, ನಾನು ನನ್ನ ಬಾಳೆಹಣ್ಣನ್ನು ತಿನ್ನಲಿಲ್ಲ. ನಾನು ತುಂಬಾ ಹುಡುಕಿದೆ ಆದರೆ ಯಾರೂ ಇಲ್ಲದ ಸ್ಥಳ ನನಗೆ ಸಿಗಲಿಲ್ಲ. ನಾನು ಎಲ್ಲಿಗೆ ಹೋದರೂ, ದೇವರು ಯಾವಾಗಲೂ ನನ್ನನ್ನು ನೋಡುತ್ತಿದ್ದನು. ಯಾರಿಗೂ ತಿಳಿಯದಂತೆ ನಾನು ತಿನ್ನಬೇಕೆಂದು ನೀವು ಹೇಳಿದ್ದೀರಿ, ನಾನು ಹಾಗೆ ಮಾಡಲು ಸಾಧ್ಯವಿಲ್ಲ ಏಕೆಂದರೆ ದೇವರು ಎಲ್ಲೆಡೆ ಇದ್ದನು’. ದ್ರವ್ಯ ಇರದ ಸ್ಥಳದಲ್ಲಿ ಬಾಳೆಹಣ್ಣನ್ನು ತಿನ್ನಲು ಹೇಳಿದರೆ, ನಾವು ಅದನ್ನು ತಿನ್ನದೇ ಒಯ್ಯಬೇಕಾಗುತ್ತದೆ.

ದೇವರು ಯಾರು? ಪ್ರತಿಯೊಬ್ಬರದು ಒಂದೊಂದು ಅನುಭವ, ಅಭಿಪ್ರಾಯ

ದೇವರ ಆಟ ಬಲ್ಲವರಾರು.. ಆತನ ಎದಿರು ನಿಲ್ಲುವರಾರು..
ಕೇಳದೆ ಸುಖವ ತರುವ.. ಹೇಳದೆ ದುಃಖವ ಕೊಡುವ..
ತನ್ನ ಮನದಂತೆ ಕುಣಿಸಿ ಆಡುವ..

ಇಲ್ಲಿ “ದೇವರು” ಎಂದರೆ ಯಾರು ಎಂಬ ಪ್ರಶ್ನೆ ಮುಖ್ಯ? ಬಲ್ಲವರು ಅದನ್ನು ಮಹಾಶಕ್ತಿ ಅನ್ನಬಹುದು, ಇನ್ನೂ ಕೆಲವರು ಅದಕ್ಕೆ ರೂಪ ಕೊಡಬಹುದು. ಅದಕ್ಕೆ ಮಹಾನ್ ಶಕ್ತಿ ಇರುವ ಕಾರಣ ಅದನ್ನು ಒಳಿತಿಗಾಗಿ ಪೂಜಿಸಬಹುದು. ಇದೆ ಕಾರಣ ಇರಬಹುದು ಮೊದಲು ಶಕ್ತಿ ಪೂಜೆ ಆಗಿದ್ದು …ನೀರು, ನೆಲ, ಗಾಳಿ, ಬೆಂಕಿ ಮತ್ತು ಆಕಾಶ ಪಂಚಭೂತಗಳು ದೈವಗಳಾಗಿದ್ದು. ನಿಸರ್ಗದ ಆಟ ಪ್ರತಿ ವರ್ಷ ನಾವು ನೋಡುತ್ತೇವೆ, ಪ್ರವಾಹ ಬಂದು ಮುಳುಗಿದ ಜನ ವಸತಿಗಳೆಷ್ಟೋ, ಸುಟ್ಟ ಕಾಡುಗಳ ಬೆಂಕಿ ಊರೊಳಗೆ ಬಂದು ರುದ್ರ ನರ್ತನ ಮಾಡಿವೆ, ಸರಿದ ನೆಲ ಊರನ್ನೇ ನುಂಗಿ ಹಾಕಿದೆ, ಸುಂಟರ ಗಾಳಿಗೆ ಮನೆಗಳೇ ಹಾರಿ ಹೋಗಿವೆ, ಇಂತಹ ಪ್ರಕೋಪಗಳನ್ನು ಮಾನವನು ತಡೆಯಬಲ್ಲನೆ? ಹಾಗಿದ್ದರೆ ಈ ನಿಸರ್ಗದ ಆಟ ಯಾವದೂ ಮಹಾನ್ ಶಕ್ತಿ ಕಾರಣವಿರಬಹುದೇ?

ನಿಸರ್ಗ ಶಕ್ತಿಯಾಗಿ ನಮ್ಮನ್ನು ನಡೆಸಲ್ಲದಾದರೆ; ಅದರ ಸುಂದರತೆ ನಮ್ಮ ಮನ ತಣಿಸಿ, ನಮ್ಮನ್ನು ಕುಣಿಸಬಹದು. ಕುವೆಂಪು ಅವರು ಪೂಜಿಸುವ ಪರಿ ನೋಡೋಣ ಈ ಕೆಳಗಿನ ಸಾಲುಗಳಲ್ಲಿ

ಶಿವಮಂದಿರ ಸಮ ವನಸುಂದರ ಸುಮ ಶೃಂಗಾರದ ಗಿರಿಶೃಂಗಕೆ ಬಾ!
ಬಾ ಫಾಲ್ಗುಣ ರವಿ ದರ್ಶನಕೆ!
ಕುಂಕುಮ ಧೂಳಿಯ ದಿಕ್ತಟವೇದಿಯೊಳೋಕುಳಿಯಲಿ ಮಿಂದೇಳುವನು
ಕೋಟಿವಿಹಂಗಮ ಮಂಗಲರವರಸನೈವೇದ್ಯಕೆ ಮುದ ತಾಳುವನು
ಚಿನ್ನದ ಚೆಂಡನೆ ಮೂಡುವನು; ಹೊನ್ನನೆ ಹೊಯ್‌ನೀರ್ ನೀಡುವನು
ಸೃಷ್ಟಿಯ ಹೃದಯಕೆ ಪ್ರಾಣಾಗ್ನಿಯ ಹೊಳೆಹರಿಯಿಸಿ ರವಿ ದಯಮಾಡುವನು |

ಈ ಸುಂದರತೆ ಶಕ್ತಿಯಾದರೆ, ಈ ಶಕ್ತಿಯನ್ನೇ ನಾವು ದೈವ ಎಂದೇವೆ? ಕಾಣದ ಈ ಶಕ್ತಿಯನ್ನು ದೇವರೆನ್ನಬಹುದೇ?

ಯುರೋಪಿಯನ್ ನ್ಯೂಕ್ಲಿಯರ್ ರಿಸರ್ಚ್ ಸಂಸ್ಥೆಯ ವೈಜ್ಞಾನಿಕ ಶೋಧನೆ “Antimatter ” ಬಗ್ಗೆ ಮತ್ತೆ ವಿಚಾರಕ್ಕೆ ಬರೋಣ. ನಾವು ದ್ರವ್ಯ (ಮ್ಯಾಟರ್) ಮತ್ತು ಪ್ರತಿದ್ರವ್ಯ (ಆಂಟಿಮ್ಯಾಟರ್) ವಿಷಯ ತಿಳಿಯುವಾಗ ಇವೆರಡಲ್ಲದೆ ಇನ್ನೊಂದು ಪ್ರಕಾರದ ದ್ರವ್ಯ ನೋಡೋಣ, ಅದು ಡಾರ್ಕ್ ಮ್ಯಾಟರ್. ಇದಕ್ಕೆ ಕನ್ನಡ ಪದ ಸಿಗದ ಕಾರಣ ಇದನ್ನು ಇಲ್ಲಿ ಕತ್ತಲದ್ರವ್ಯ ಅಥವಾ ಅಂಧಕಾರದ ದ್ರವ್ಯ ಎನ್ನಬಹುದೇ?
ಇಲ್ಲಿ ದ್ರವ್ಯ ಭೂಮಿ ಮತ್ತು ಇತರ ಸೃಷ್ಟಿ ಪ್ರಕಾರ ಇದ್ದಂತೆ, ಪ್ರತಿದ್ರವ್ಯ ಮತ್ತು ಡಾರ್ಕ್ ಮ್ಯಾಟರ್ ಇನ್ನೊಂದು ಸೃಷ್ಟಿಗೆ ಕಾರಣವಿರುತ್ತದೆ. ಈ ಕಾರಣಕ್ಕಾಗಿ, ಮೂರು ಪ್ರಕಾರಗಳನ್ನು ನಾವು ಮೂರು ಲೋಕಕ್ಕೆ ಹೊಂದಿಸಬಹುದೇ?

ಭೂಲೋಕ, ಸ್ವರ್ಗ, ಪಾತಾಳಲೋಕ – ಮಾನವರು ಮತ್ತು ಪ್ರಾಣಿ/ಪಕ್ಷಿ/ಜೀವಗಳು ವಾಸಿಸುವ ಲೋಕ ಭೂಲೋಕ. ದೇವತೆಗಳು, ಅಪ್ಸರೆಯರು ವಾಸಿಸುವ ಉನ್ನತ ಲೋಕ ಸ್ವರ್ಗ ಮತ್ತು ಭೂಮಿಯ ಕೆಳಗಿರುವ ಅಸುರರ ಕೇಳರಿಯದ, ನೋಡದ ಲೋಕ ಪಾತಾಳಲೋಕ. ಜೀವಗಳು ವಾಸಿಸುವ ಲೋಕ ಭೂಲೋಕದಲ್ಲಿ ಎಲ್ಲಕೂ ದ್ರವ್ಯ ರೂಪಕ, ಆದುದರಿಂದ ಇದನ್ನು ದ್ರವ್ಯ ಪ್ರಕಾರದಲ್ಲಿ ನೋಡುತ್ತೇವೆ. ಉನ್ನತ ಲೋಕದ ಭಿನ್ನ ಜಗತ್ತನ್ನು ಪ್ರತಿದ್ರವ್ಯ ಎಂದು, ಕಾಣದ ಕತ್ತಲ ಪಾತಾಳ ಲೋಕವನ್ನು ಡಾರ್ಕ್ ಮ್ಯಾಟರ್ ಎಂದು ನೋಡೋಣ.

ವಿಶ್ವಾಮಿತ್ರ ಮತ್ತು ತ್ರಿಶಂಕು ಕಥೆ ನೋಡೋಣ, ಸತ್ಯವ್ರತ ರಾಜ (ಮುಂದೆ ತ್ರಿಶಂಕು ಎಂದು ಕರೆಯಲ್ಪಟ್ಟ) ಸ್ವರ್ಗಕ್ಕೆ ಹೋಗಲು ಇಚ್ಛಿಸಿ ವಿಶ್ವಾಮಿತ್ರರನ್ನು ಕೇಳಿಕೊಂಡಾಗ, ವಿಶ್ವಾಮಿತ್ರರು ಯಾಗದಿಂದ ರಾಜನನ್ನು ಸ್ವರ್ಗದ ಬಾಗಿಲಿಗೆ ಕಳುಹಿಸಿದರು. ಆದರೆ ಇಂದ್ರ ರಾಜನನ್ನು ಕೆಳಕ್ಕೆ ನೂಕಿದಾಗ, ವಿಶ್ವಾಮಿತ್ರರು ಸತ್ಯವ್ರತ ರಾಜನನ್ನ ಮಧ್ಯದಲ್ಲಿ ನಿಲ್ಲಿಸಿ ಅವನಿಗೆ ಒಂದು ಸ್ವರ್ಗವನ್ನೇ ನಿರ್ಮಿಸಿದರು. ಈ ಕಥೆ ಇಲ್ಲಿ ತಿಳಿಸಿದ ಕಾರಣ, ಇದನ್ನು ಇನ್ನೊಂದು ರೀತಿಯಲ್ಲಿ ನೋಡಲು – ವಿಶ್ವಾಮಿತ್ರರು ರಾಜನನ್ನು ದ್ರವ್ಯ ಪ್ರಕಾರದ ಲೋಕದಿಂದ ಪ್ರತಿದ್ರವ್ಯ ಲೋಕಕ್ಕೆ ಕಳುಹಿಸಲು ವಿರುದ್ಧ ವಿದ್ಯುದಾಂಶ ಉಪಯೋಗಿಸಿದರೆ? ರಾಜನನ್ನು ಕೆಳಕ್ಕೆ ನೂಕಿದಾಗ ಎರಡು ಲೋಕದ ಮಧ್ಯ ವಿದ್ಯುದಾಂಶದ ಸಮತೋಲನದಲ್ಲಿ ನಿಲ್ಲಿಸಿದರೆ?
ಮೇಲಿನ ವಿಷಯ ನೋಡಿದಾಗ ಕಥೆ ಎನಿಸಬಹುದು…
ಹಲವು ದಶಕಗಳ ಹಿಂದೆ ಸಂಜಯನ ಮಹಾಭಾರತದ ಯುದ್ಧ ಲೈವ್ ಕಾಮೆಂಟರಿ ಎಲ್ಲರಿಗೂ ಕಥೆ ಎನಿಸಿತಿತ್ತು, ಆದರೆ ದೂರದರ್ಶನದ ನಂತರ ಮತ್ತು ಇತ್ತೀಚಿನ ಜೂಮ್ ಕಾಲ್ ನಂತರ ಪ್ರತಿ ಒಂದು ಸಣ್ಣ ಕಾರ್ಯಕ್ರಮ ಸಂಜಯನ ಲೈವ್ ಟೆಲಿಕಾಸ್ಟ್ ನಂತೆ ನೋಡಬಹುದಾಗಿದೆ. ವಿಜ್ಞಾನ ಮುಂದುವರೆದು ಹೊಸ ಆವಿಷ್ಕಾರ ಮಾಡುತ್ತ ಹೋದರೂ ಹೊಸ ವಿಸ್ಮಯಗಳು ನಮ್ಮೆದುರಿಗೆ ದುತ್ತೆಂದು ಬಂದು ನಿಲ್ಲುತ್ತವೆ. ವಿಸ್ಮಯಗಳ ಈ ಸಾಗರವೇ ಕಾಣದ, ತಿಳಿಯದ ಶಕ್ತಿ ಆಗಿದೆ.

ಹಾರ್ವರ್ಡ್ ಖಗೋಳ ಭೌತಶಾಸ್ತ್ರಜ್ಞ ಡಾ. ವಿಲ್ಲಿ ಸೂನ್ ಅವರ ಅಭಿಪ್ರಾಯದಂತೆ ಜಗತ್ತು ಒಂದು ಮಹಾನ್ ಶಕ್ತಿ ನಡೆಸುತ್ತಿದೆ ಎಂದು ತಿಳಿಸುತ್ತಾರೆ. ದ್ರವ್ಯ, ಪ್ರತಿದ್ರವ್ಯದ ನಿಖರವಾದ ಅಸಮತೋಲನವು ಉದ್ದೇಶಪೂರ್ವಕ ವಿನ್ಯಾಸವನ್ನು ಸೂಚಿಸುತ್ತದೆ, ಈ ಅಸಮತೋಲನ ಇರದಿದ್ದರೆ ಎಲ್ಲವೂ ನಾಶವಾಗುತ್ತಿತ್ತು. ಈ ಒಂದು ದ್ರವ್ಯ, ಪ್ರತಿದ್ರವ್ಯದ ಅಸಮತೋಲನ ಸಮೀಕರಣ ಅದೃಷ್ಟದಲ್ಲ, ಜಗವನ್ನು ಮತ್ತು ಜೀವರಾಶಿಯನ್ನು ನಡೆಸಿಕೊಂಡು ಹೋಗಲು ಮಾಡಿದ ಒಂದು ಮಹಾನ್ ನಿಯಮ. ಇದನ್ನೇ ನಾವು ದಶಾವತಾರದಲ್ಲಿ ಜಗವನ್ನು ಉಳಿಸಲು ಮತ್ಸ್ಯ. ಕೂರ್ಮ, ವರಾಹ ಇತ್ಯಾದಿ ಅವತಾರದಲ್ಲಿ ನೋಡಿದ್ದೇವೆ… ಕಲ್ಕಿಗಾಗಿ ಕಾಯುತ್ತಿದ್ದೇವೆ.

ಲೇಖನ ಅನಿಶ್ಚಿತೆಯಿಂದ ನಿಲ್ಲಿಸುತ್ತಿಲ್ಲ, ವಿಚಾರವನ್ನು ಮುಂದುವರಿಸೋಣ

ಜಡೆಯಾಚೆಯ ತಾಯ ಮುಖ

ಡಾ ಜಿ ಎಸ್ ಶಿವಪ್ರಸಾದ್

ರೇಖಾಚಿತ್ರ: ಲಕ್ಷ್ಮೀನಾರಾಯಣ ಗುಡೂರ್.
ಶಿವಮೊಗ್ಗ ಜಿಲ್ಲೆಯ ಈಸೂರಿನ ಒಂದು ಬಾಡಿಗೆ ಮನೆಯಲ್ಲಿ ಒಂದು ಕೂಸು ತೊಟ್ಟಿಲಲ್ಲಿ ಮಲಗಿದೆ.  ತಾಯಿಯು, ಮಗು ಮಲಗಿದೆಯಲ್ಲ ಒಂದೆರಡು ನಿಮಿಷದಲ್ಲಿ ಬಂದರಾಯಿತು ಎಂದು ತಿಳಿದು ಮನೆಯ ಬಾಗಿಲನ್ನು ಎಳೆದುಕೊಂಡು ಹತ್ತಿರದ ಭಾವಿಗೆ ನೀರು ತರಲು ಹೋಗುತ್ತಾಳೆ.  ಆಗ ಇದ್ದಕ್ಕಿದ ಹಾಗೆ ಈ ಮನೆಯ ಪಕ್ಕದ ಹುಲ್ಲು ಜೋಪಡಿಗೆ ಬೆಂಕಿ ಹತ್ತಿಕೊಂಡು, ಅದು ಅಕ್ಕಪಕ್ಕದ ಮನೆಗಳಿಗೆ ಹಬ್ಬಿ ನಂತರದಲ್ಲಿ ಮಗು ಮಲಗಿದ್ದ ಮನೆಗೂ ಬೆಂಕಿ ಹತ್ತಿಕೊಳ್ಳುತ್ತದೆ.  ಜನರ ಗದ್ದಲ ಕೇಳಿ ನೀರಿಗೆ ಹೋಗಿದ್ದ ತಾಯಿ ಬಂದು ನೋಡುತ್ತಾಳೆ, ಮನೆಯ ಒಂದು ಭಾಗವನ್ನು ಬೆಂಕಿ ಮೇಯುತ್ತಿದೆ.  ಆ ಹೊಗೆ ಬೆಂಕಿಯ ನಡುವೆ ನುಗ್ಗಿ ತೊಟ್ಟಿಲಲ್ಲಿ ಮಲಗಿದ್ದ ಮಗುವನ್ನೆತ್ತಿಕೊಂಡು, ಆಕೆ ಉರಿಯುವ ಮನೆಗಳ ನಡುವೆ ಹಾದು ಊರಾಚೆಯ ಬಯಲಿಗೆ ಬಂದು ಕೂರುತ್ತಾಳೆ.  ಬೆಂಕಿ ಹತ್ತಿದ ಸುದ್ದಿ ಕೇಳಿ ತತ್ತರಿಸಿಹೋಗಿದ್ದ ಸ್ಕೂಲ್ ಮೇಸ್ಟ್ರಾದ ಮಗುವಿನ ತಂದೆ ಬಂದು ನೋಡುತ್ತಾರೆ, ಮನೆಯಲ್ಲಿ ತಾಯಿ-ಮಗು ಇಲ್ಲ, ಮನೆ ಹೆಚ್ಚೂ ಕಡಿಮೆ ಸುಟ್ಟು ಹೋಗಿದೆ.  ಗಾಬರಿಗೊಂಡ ಅವರಿಗೆ ತಾಯಿ ಮಗು ಈ ಗಂಡಾಂತರದಿಂದ ಪಾರಾದ ವಿಚಾರವನ್ನು ಊರಿನ ಜನ ತಿಳಿಸುತ್ತಾರೆ.  ಊರ ಹೊರಗೆ ಮರದ ಕೆಳಗೆ ಸುರಕ್ಷಿತವಾಗಿ ಕೂತ ಹೆಂಡತಿ ಮತ್ತು ಮಗುವನ್ನು ನೋಡಿದ ಅವರಿಗೆ ಸಮಾಧಾನವಾಗುತ್ತದೆ. 

ಮುಂದಿನ ಎರಡು ವರ್ಷದ ತರುವಾಯ ಒಂದು ದಿನ ಮೇಸ್ಟ್ರು, ಅವರ ಹೆಂಡತಿ, ಮಗು ಸಮೇತವಾಗಿ ಶಿವಮೊಗ್ಗ ನಗರಕ್ಕೆ ಬಂದು ಥಳಥಳಿಸುವ ತುಂಗಾ ನದಿಯ ಮರಳು ಹಾಸಿನ ಮೇಲೆ ಕೂತು ತಾವು ತಂದ ಜೋಳದ ರೊಟ್ಟಿಯ ಗಂಟನ್ನು ಬಿಚ್ಚಿ ಸಂಜೆಯ ಉಪಾಹಾರದಲ್ಲಿ ಮಗ್ನರಾಗಿರುತ್ತಾರೆ. ಮಗುವಿಗೆ ಒಂದು ರೊಟ್ಟಿಯ ತುಣುಕನ್ನು ಕೊಟ್ಟಾಗ ಮಗು ರೊಟ್ಟಿಯನ್ನು ತಿನ್ನುತ್ತಾ ಅವರ ಬೆನ್ನ ಹಿಂದೆ ಅಡ್ಡಾಡಲು ಶುರುಮಾಡುತ್ತದೆ. ಸಂಜೆಯ ಬಿಸಿಲಿಗೆ ಬೆಳ್ಳಿಯಂತಿದ್ದ ನೀರು, ಅದರ ಜುಳು ಜುಳು ನಿನಾದ ಈ ಮಗುವನ್ನು ಬಾ ಬಾ ಎಂದು ಕರೆಯುತ್ತದೆ. ಎರಡು ವರ್ಷದ ಆ ಮಗು ತುಂಗಾನದಿಯ ಅಂಚಿಗೆ ಧಾವಿಸುತ್ತದೆ. ತಂದೆ-ತಾಯಿಯ ಬೆನ್ನ ಹಿಂದೆ "ಅಯ್ಯೋ ಅಯ್ಯೋ, ಅಲ್ನೋಡಿ ಆ ಮಗು ನೀರಿನಲ್ಲಿ ಬೀಳುತ್ತಿದೆ” ಎಂದು ಯಾರೋ ಕೂಗಿಕೊಳ್ಳುತ್ತಾರೆ. ತಾಯಿ, ತಿನ್ನುತ್ತಿದ್ದ ರೊಟ್ಟಿಯನ್ನು ತಟ್ಟನೆ ಕೆಳಗೆ ಹಾಕಿ ಓಡಿಹೋಗಿ ಅಷ್ಟು ಹೊತ್ತಿಗೆ ನೀರಿನಲ್ಲಿ ಮಗುಚಿ ಬಿದ್ದ ಮಗುವಿನ ತೋಳು ಹಿಡಿದು ಎತ್ತಿಕೊಂಡು ಹಿಂದಕ್ಕೆ ತರುತ್ತಾಳೆ.

ಈ ಮಗುವನ್ನು ನೀರು ಮತ್ತು ಬೆಂಕಿ ಅಪಾಯಗಳಿಂದ ಪಾರು ಮಾಡಿದ ತಾಯಿ, ಈ ಮಗುವಿಗೆ ಆರು ವರ್ಷ ತುಂಬಿದಾಗ ಅನಿರೀಕ್ಷಿತವಾಗಿ ತೀರಿಕೊಳ್ಳುತ್ತಾಳೆ. ಆಕೆಯ ಹೆಸರು ವೀರಮ್ಮ, ಮತ್ತವಳ ಈ ಮಗುವೇ ಜಿ ಎಸ್ ಶಿವರುದ್ರಪ್ಪ (ಡಾ ಜಿಎಸ್ಸೆಸ್); ಮೇಲೆ ಪ್ರಸ್ತಾಪಿಸಿರುವ ಮಗುವಿನ ತಂದೆ ಸ್ಕೂಲ್ ಮೇಸ್ಟ್ರು ಜಿ. ಶಾಂತವೀರಪ್ಪನವರು. ವೀರಮ್ಮನವರು ತೀರಿದ ಬಳಿಕ ಶಾಂತವೀರಪ್ಪನವರು ಮತ್ತೆ ಮದುವೆಯಾಗುತ್ತಾರೆ. ಅಲ್ಲಿಂದ ಮುಂದಕ್ಕೆ ಜಿಎಸ್ಸೆಸ್ ತಮ್ಮ ತಂದೆ ಶಾಂತವೀರಪ್ಪ ಮತ್ತು ಮಲತಾಯಿ ಶಾಂತಮ್ಮ ಅವರ ಆರೈಕೆಯಲ್ಲಿ ಬೆಳೆಯುತ್ತಾರೆ.

ಜಿಎಸ್ಸೆಸ್, ತೀರಿಕೊಂಡ ಅವರ ತಾಯಿಯನ್ನು ಕುರಿತು 'ಚತುರಂಗ' ಎಂಬ ತಮ್ಮ ಅಸಮಗ್ರ ಆತ್ಮ ಕಥನದಲ್ಲಿ ಹೀಗೆ ಬರೆಯುತ್ತಾರೆ; "ತಾಯಿಯ ಬಗ್ಗೆ ಅವಳ ಮುಖದ ಬಗ್ಗೆ ನನಗೆ ನಿಲ್ಲುವುದು ಒಂದು ಅಸ್ಪಷ್ಟವಾದ ನೆನಪು. ಮಮತೆ ತುಂಬಿದ ಮುಖ, ಹೊಳೆಯುವ ಎರಡು ಕಣ್ಣುಗಳು, ತಲೆಯ ತುಂಬಾ ಹೊದ್ದ ಹಸುರು ಸೆರಗು. ಆಕೆ ಮಧುರವಾಗಿ ಹಾಡುತ್ತಿದ್ದಳು. ಆಕೆ ತೀರಿದಾಗ ನನಗೆ ಆರು ವರ್ಷ ವಯಸ್ಸು. ನಾನು, ನನ್ನ ತಮ್ಮ ಆಕೆ ತೀರಿಕೊಂಡಾಗ ಹಾಯಾಗಿ ಆಟವಾಡುತ್ತಿದ್ದೆವು. ‘ನಿನ್ನ ಅಮ್ಮ ದೇವರ ಹತ್ತಿರ ಹೋಗಿದ್ದಾಳಪ್ಪ’ ಎಂದು ಅವರಿವರು ಹೇಳಿದ್ದನ್ನು ಕೇಳಿ ಮತ್ತೆ ಬರುತ್ತಾಳೆ ಎಂದು ನಂಬಿದ್ದೆ. ಆಮೇಲೆ, ಹಾಗೆ ಅವರು ಹೇಳಿದ್ದು ಸುಳ್ಳು ಎಂಬುದು ಅರ್ಥವಾಗಿ ಆಕೆ ಮತ್ತೆ ಬರುವುದೇ ಇಲ್ಲವೆಂದು ಖಚಿತವಾದಾಗ ನಿಜಕ್ಕೂ ಅಳು ಒತ್ತರಿಸಿಕೊಂಡು ಬಂತು. ಆಮೇಲೆ "ಕಂಡ ಕಂಡ ಹೆಣ್ಣ ಮೊಗದಿ ತಾಯಿ ಮುಖವನರಸಿದೆ". ಅನಂತರ ಇನ್ನೊಬ್ಬ ತಾಯಿ ಮನೆಯನ್ನು ತುಂಬಿದಳು"

ಹೀಗೆ ತಾಯಿಯನ್ನು ಕಳೆದುಕೊಂಡ ಕವಿಯ ದುಃಖ ಮುಂದಕ್ಕೆ ತಾಯಿಯನ್ನು, ಸ್ತ್ರೀಯರನ್ನು ಕುರಿತ ಅವರ ಅನೇಕ ಕವಿತೆಗಳಗೆ ವಸ್ತುವಿಷಯವಾಯಿತು. ಈ ಹಿನ್ನೆಲೆಯಲ್ಲಿ ಜಿಎಸ್ಸೆಸ್ ಅವರ ಕೆಲವು ಕವಿತೆಗಳನ್ನು ಗಮನಿಸೋಣ:
ಅನ್ವೇಷಣೆ 

ಕಂಡ ಕಂಡ ಹೆಣ್ಣ ಮೊಗದಿ
ನಿನ್ನ ಮೊಗವನರಸಿದೆ
ಏನಾದರೂ ಕಾಣಲಿಲ್ಲ
ನಿಡುಸುಯ್ಲೊಳು ಮುಳಿಗಿದೆ

ಎಳೆಯತನದಿ ಕಂಡ ನೆನಪು
ಮಸುಕು ಮಸುಕು ಮನದಲಿ
ಕರುಣೆಯಿಂದ ಕಂಡ ಕಣ್ಣು
ಮುತ್ತನಿಟ್ಟ ತುಟಿಯ ಚಿತ್ರ
ಇಷ್ಟು ಮಾತ್ರ ಉಳಿದಿರುವುದು
ಸವಿನೆನಪಿನ ಪುಟದಲಿ

ಒಬ್ಬಿಬ್ಬರ ಮೊಗದಿ ನಿನ್ನ
ಬಿಂಬ ಮೂಡಿದಂತೆ ಭಾಸ -
ವಾಯಿತೊಮ್ಮೆ ಅಂದು ನಾನು
ರೋಮಾಂಚನಗೊಳ್ಳಲು;
ಎಂತಿದ್ದೆಯೊ ತಾಯಿ ನೀನು
ನಾನು ಚಿತ್ರಗಾರನೇನು
ನಿನ್ನ ಚಿತ್ರ ಬರೆಯಲು?

ಇಂತೂ ಕಾಲ ಕಳೆದುದಾಯ್ತು
ಎಲ್ಲ ಹೆಣ್ಣ ಮೊಗದಿ ನಿನ್ನ
ಬಿಂಬ ಕಾಣುವಾಸೆಯೊಂದು
ನನ್ನ ಸುತ್ತ ಮುತ್ತಿತ್ತು

ಮದುವೆಯಾಯ್ತು ಮಕ್ಕಳಾಯ್ತು
ಬಾಳ ನೂಲು ಬಿಗಿಯಿತು
ಕಡೆಗೆ ಇಲ್ಲಿ ನನ್ನ ಮಡದಿ
ಮಗುವಿಗೆ ಮುತ್ತಿಡುವ ಹೊತ್ತು
ನಿನ್ನ ಚಿತ್ರ ಮೂಡಿತು
ಬೆರಗು-ಹರ್ಷ ಕವಿಯಿತು!
ಅನ್ವೇಷಣೆ ಎಂಬ ಈ ಕವಿತೆಯಲ್ಲಿ ತಾಯಿಯನ್ನು ಎಳೆ ವಯಸ್ಸಿನಲ್ಲಿ ಕಳೆದುಕೊಂಡ ಕವಿಯು ತನ್ನ ತಾಯಿಯ ಮುಖವನ್ನು ಕಂಡ ಕಂಡ ಹೆಣ್ಣುಗಳಲ್ಲಿ ಅನ್ವೇಷಿಸುತ್ತಾರೆ. ಆದರೆ ಹಾಗೆ ಅನ್ವೇಷಿಸುವುದಕ್ಕೆ ಮುನ್ನ ತಾಯಿಯ ಭಾವ ಚಿತ್ರ ಕವಿಗೆ ದೊರೆತಿಲ್ಲ. ಅವಳು ಹೇಗಿದ್ದಾಳೆ ಎಂಬ ಕಲ್ಪನೆಯೇ ಇಲ್ಲ. ತಾಯಿಯ ಕರುಣೆ, ಮಮತೆ, ಮುತ್ತಿಟ್ಟ ನೆನಪಷ್ಟೇ ಕವಿಯ ಮನಸ್ಸಿನಲ್ಲಿ ಉಳಿದಿದೆ. ಹೀಗಿರುವಾಗ ಕವಿ ಕಂಡ ಕಂಡ ಹೆಣ್ಣುಗಳಲ್ಲಿ ತಾಯಿ ಮುಖ ಅರಸುವುದಾದರೂ ಹೇಗೆ? ನೆನಪಿನಲಿ ಉಳಿದುದ್ದನ್ನು ಹಾಳೆಯ ಮೇಲೆ ಮೂಡಿಸಲು ಕವಿ ಚಿತ್ರಕಾರನೂ ಅಲ್ಲ. ತಾಯಿಯ ಮುಖದ ಅಸ್ಪಷ್ಟತೆಯ ನಡುವೆ ಸ್ಪಷ್ಟವಾಗಿ ಉಳಿದದ್ದು ಆಕೆಯ ಮಮತೆಯಷ್ಟೇ. ಈ ಅನ್ವೇಷಣೆಗಳ ನಡುವೆ ಕವಿಯ ಬಾಳಿನ ನೂಲು ಬಲವಾಗುತ್ತದೆ, ಕವಿಗೆ ಮದುವೆಯಾಗುತ್ತದೆ, ಮಕ್ಕಳಾಗುತ್ತವೆ. ಈ ಅನ್ವೇಷಣೆಯಲ್ಲಿ ಕವಿಗೆ ಕೊನೆಗೂ ತಾಯಿಯ ಮುಖ ಕಂಡದ್ದು ಒಂದು ಸುಂದರ ಭಾವನೆಯಲ್ಲಿ; ತನ್ನ ಹೆಂಡತಿಯೇ ತನ್ನ ಮಗುವಿಗೆ ಮುತ್ತನಿಡುವ ಚಿತ್ರದಲ್ಲಿ ಕವಿಯ ಅನ್ವೇಷಣೆ ಮುಗಿಯುತ್ತದೆ. ತಾಯಿಯ ಪ್ರೀತಿ ಮತ್ತು ಅದರ ಸ್ವರೂಪ ಸ್ಪಷ್ಟವಾಗುತ್ತದೆ.
ಜಿಎಸ್ಸೆಸ್ 'ತಾಯಿಗೆ' ಎಂಬ ನೀಳ್ಗವನದಲ್ಲಿ ಬರೆದ ಸಾಲುಗಳು ಹೀಗಿವೆ: 

ಬೇರೆ ಬೇರೆ ತಾಯಂದಿರನು ನೀನೆಂದು ಭ್ರಮಿಸಿ
ಕೂಗಿ ನಿಷ್ಫಲನಾಗಿ ತಪಿಸಿ
ನೀ ತೋರದಿರಲಾಗಿ
ಕಣ್ಣೀರಿನಲಿ ಮಲಗಿ
ಕನಸಿನಲಿ ನಾನಿನ್ನ ಕಂಡುದುಂಟು
ಕನಸೊಡೆಯೆ ಕಾದಿತ್ತು ಜಗದ ನಂಟು

ಮನೆಯ ತುಂಬಿದಲಂದು ಮತ್ತೊಬ್ಬ ಮಾತೆ
ಮನವ ತುಂಬಲೆ ಇಲ್ಲ - ಅವಳನ್ನದಾತೆ!
ನೀನಿತ್ತ ಒಲವನ್ನು ಆ ದಿವ್ಯ ಸುಧೆಯನ್ನು
ಪರರಿಂದ ಕಡವಾಗಿ ಪಡೆಯ ಬಹುದೇ?
ದೊರೆಯದಿರೆ ಅದಕಾಗಿ ಕೊರಗಬಹುದೇ.

ಈ ಬಗೆಯ ನೋವಿನಲಿ ಏನೋ ಚೆಲುವುಂಟು
ಪರರ ನೋವಿನ ಬಗೆಗೆ ಅನುಕಂಪವುಂಟು
ನೋವಿನಲಿ ನಲಿವುಂಟು
ನಲಿವಿನಲಿ ನೋವುಂಟು
ಎಂಬ ಅನುಭವವಾಗಿ ಬೆಳಕು ಮೂಡುತಿದೆ
ನೋವು ಸೃಷ್ಟಿಯ ಮೂಲ ಎಂದು ತೋರುತಿದೆ
ತಾಯಿಯನ್ನು ಕಳೆದುಕೊಂಡ ನೋವು, ಮತ್ತು ಮುಂದಕ್ಕೆ ಹೆಚ್ಚಾದ ಬಡತನ ಕವಿಯನ್ನು ಬಹಳವಾಗಿ ಕಾಡಿದ ವಿಚಾರವಾಯಿತು. ಈ ನೋವಿನಿಂದ ಉಂಟಾದ ಇತರರ ಬಗೆಗಿನ ಅನುಕಂಪ ಜಿಎಸ್ಸೆಸ್ ಅವರ ಅನೇಕ ಕವಿತೆಗಳಲ್ಲಿ ಕಾಣಬಹುದು; "ದೀಪವಿರದ ದಾರಿಯಲ್ಲಿ ತಡವರಿಸುವ ನುಡಿಗಳೇ, ಕಂಬನಿಗಳ ತಲಾತಲದಿ ನಂದುತಿರುವ ಕಿಡಿಗಳೇ, ಉಸಿರನಿಡುವೆ ಹೆಸರ ಕೊಡುವೆ, ಬನ್ನಿ ನನ್ನ ಹೃದಯಕೆ" ಎಂಬ ಸಾಲುಗಳು ಅವರಲ್ಲಿದ್ದ ಅನುಕಂಪೆಗೆ ಸಾಕ್ಷಿಯಾಗಿದೆ.  ಮೇಲಿನ ಸಾಲುಗಳಲ್ಲಿ ಇನ್ನೊಂದು ಗಮನಿಸಬೇಕಾದ ವಿಚಾರ; ಕವಿ ನೋವಿನಲ್ಲೂ ಚೆಲುವನ್ನು ಕಾಣಬಯಸುತ್ತಿದ್ದಾರೆ.  ಬಹುಶಃ ಬದುಕಿನ ಬಗ್ಗೆ ಕಾಳಜಿ, ಪ್ರೀತಿ ಇರುವವರು ಮಾತ್ರ ಈ ರೀತಿ ಆಲೋಚಿಸಬಹುದು.  ನೋವಿನಲಿ ನಲಿವುಂಟು ಎಂಬುದು ಒಂದು ತೀರಾ ವ್ಯತಿರಿಕ್ತವಾದ ಚಿಂತನೆ.  ಆದರೆ ಆ ನೋವಿನಲ್ಲಿ ನಲಿವನ್ನು ಕಾಣುವವರು ಆಶಾವಾದಿಗಳು.  ನೋವಿನಿಂದ ತಪ್ಪಿಸಿಕೊಳ್ಳಲು ಆಶಯ, ಭರವಸೆ ಅತಿ ಮುಖ್ಯ ಎಂದು ಕವಿ ತನ್ನ ಸ್ವಂತ ಅನುಭವದಿಂದ ಕಂಡುಕೊಂಡಂತಿದೆ.  ಮನುಷ್ಯನಿಗೆ ಮತ್ತು ಪ್ರಾಣಿಗಳಿಗೆ ಬೇಕಾಗಿರುವ ಉಳಿವಿನ ಪ್ರಜ್ಞೆ (Survival Instincts) ಈ ಸೋಲು, ನೋವು ಇವುಗಳಿಂದ ಕಲಿತ ಅನುಭವ.  ಸುಟ್ಟ ಬೂದಿಯಿಂದ ಮೇಲೆರುವ ಕಾಲ್ಪನಿಕ ಫೀನಿಕ್ಸ್ ಪಕ್ಷಿ ‘ನೋವು ಸೃಷ್ಟಿಯ ಮೂಲ’ ಎಂಬುದಕ್ಕೆ ರೂಪಕವಾಗಿ ನಿಲ್ಲುತ್ತದೆ.  ತಾಯಿಯನ್ನು ಕಳೆದುಕೊಂಡ ಕವಿ, ಫೀನಿಕ್ಸ್ ರೀತಿಯಲ್ಲಿ ಮತ್ತೆ ತನ್ನ ಬದುಕನ್ನು ಕಟ್ಟಿಕೊಳ್ಳುವುದು ಈ ಮೇಲಿನ ಸಾಲುಗಳಲ್ಲಿ ಅಭಿವ್ಯಕ್ತಿಗೊಂಡಿದೆ.

ಜಿಎಸ್ಸೆಸ್ ಅವರ ‘ಜಡೆ’ ಎನ್ನುವ ಪ್ರಖ್ಯಾತ ಕವನದಲ್ಲಿ ಕವಿ ಒಮ್ಮೆ ನಡೆದು ಬರುತ್ತಿರುವಾಗ ಮುಂದೆ ಕಂಡ ಲಲನೆಯರ ಬೆನ್ನ ಹಿಂದೆ ಜೋಲುವ ಜಡೆ ಕವನಕ್ಕೆ ಸ್ಪೂರ್ತಿಯಾಗುತ್ತದೆ. ಆ ಕವಿತೆಯ ಕೆಲವು ಆಯ್ದ ಸಾಲುಗಳು ಹೀಗಿವೆ;
ಲಲನೆಯರ ಬೆನ್ನಿನೆಡೆ 
ಹಾವಿನೊಲು ಜೋಲ್ವ ಜಡೆ
ಅತ್ತಿತ್ತ ಹರಿದ ಜಡೆ
ಚೇಳ್ ಕೊಂಡಿಯಂಥ ಜಡೆ
ಮೋಟು ಜಡೆ, ಚೋಟು ಜಡೆ
ಗಂಟು ಜಡೆ, ಅಕ್ಕ ತಂಗಿಯ
ಮುಡಿಯ ಹಿಡಿದು ನಾನೆಳದ ಜಡೆ
ಮಲ್ಲಿಗೆಯ ಕಂಪು ಜಡೆ
ಮಮತಾವೃಕ್ಷ ಬಿಟ್ಟ ಬಿಳಲಿನಂತೆ
ಹರಡಿರುವ ತಾಯ ಜಡೆ!
ಓ ಓ ಈ ಜಡೆಗೆಲ್ಲಿ ಕಡೆ!

ಸಂಜೆಯಲಿ ಹಗಲು ಕೆದರುವ ಕತ್ತಲೆಯ
ಕಾಳ ಜಡೆ
ಬೆಳಗಿನಲಿ ಇರುಳು ಬಿಚ್ಚುವ ಬೆಳ್ಳನೆಯ
ಬೆಳಕು ಜಡೆ
ಬೆಳ್ಳಕ್ಕಿಗಳ ಜಡೆ, ಕೊಂಚೆಗಳ ಜಡೆ
ನಕ್ಷತ್ರಗಳ ಮುಡಿದ ನೆಟ್ಟಿರುಳ ನಭದ ಜಡೆ
ಮುಂಗಾರು ಮೋಡಗಳು ದಿಕ್ಕು ದಿಕ್ಕಿಗೆ ಬಿಚ್ಚಿ
ಹರಡಿರುವ ಮಳೆಯ ಜಡೆ
ಚಂದ್ರಚೂಡನ, ವ್ಯೋಮಕೇಶನ
ವಿಶ್ವವನೆ ವ್ಯಾಪಿಸುತ ತುಂಬಿರುವ ಜಡೆ
ಎಲ್ಲವೂ ರಮ್ಯವೆಲ್ಲ!
ಜಡೆಯಾಚೆ ತಿರುಗಿಸಿದ ತಾಯ ಮುಖ ಮಾತ್ರ
ಇಂದಿಗೂ ಕಾಣದಲ್ಲ!
ಜಡೆಯ ನಾನಾ ಆಕಾರಗಳ ಚಿತ್ರಣ ಕವಿಗೆ ಕಾಣಿಸಿಕೊಳ್ಳುತ್ತದೆ; ಅಲ್ಲಿ ಕೆಲವು ಉದ್ದ ಜಡೆ, ಮೋಟುಜಡೆ, ಗಂಟು ಜಡೆ ಇವುಗಳ ವರ್ಣನೆ ಇದೆ. ಸೀತೆಯ ಕಣ್ಣೀರಿನಲಿ ಮಿಂದ ಜಡೆ ಮತ್ತು ಪಾಂಚಾಲಿಯ ಜಡೆ ಇದೆ.  ಅಕ್ಕ ತಂಗಿಯರ ಜಡೆ ಇದೆ, ಮುಖ್ಯವಾಗಿ ‘ಮಾತೃ ಮಮತಾವೃಕ್ಷ ಬಿಟ್ಟ ಬಿಳಲಿನಂತೆ ಹರಡಿರುವ ಜಡೆ’ ಇದೆ.  ಪರ್ವತ ಶ್ರೇಣಿಗಳ, ಕಾನನದ, ಹೊಳೆಯ, ಪ್ರಕೃತಿಯ ಜಡೆ ಇದೆ. ಕವಿತೆ ಸಾಗಿದಂತೆ ಆ ಜಡೆ ನೆಲವನ್ನು ಬಿಟ್ಟು ಮೇಲಕ್ಕೆ ಹಾರುತ್ತದೆ.  ಅಲ್ಲಿ ಕತ್ತಲೆಯ ಕಾಳ ಜಡೆ ಇದೆ, ಬೆಳಕಿನ ಜಡೆ ಇದೆ, ಬೆಳ್ಳಕ್ಕಿಗಳ ಸಾಲುಗಳ ಜಡೆ ಇದೆ.  ಕವನ ಮುಂದಿನ ಹಂತದಲ್ಲಿ ಆಕಾಶವನ್ನೂ ಮೀರಿ ಅಧ್ಯಾತ್ಮಕ್ಕೆ ಜಿಗಿಯುತ್ತದೆ.  ಅಲ್ಲಿ ಚಂದ್ರ ಚೂಡನ, ವ್ಯೋಮಕೇಶನ ವಿಶ್ವವನೇ ವ್ಯಾಪಿಸುತ ತುಂಬಿರುವ ಜಡೆ ಇದೆ.  ಎಲ್ಲವೂ ರಮ್ಯವಾಗಿದ್ದರೂ ಕವಿಗೆ ಇಲ್ಲೊಂದು ಕೊರತೆಯಿದೆ.  ಇದು ಕವಿತೆಯ ಕೊನೆ ಸಾಲಿನಲ್ಲಿ ಹೀಗೆ ಅಭಿವ್ಯಕ್ತಗೊಂಡಿದೆ; "ಜಡೆಯಾಚೆ ತಿರುಗಿಸಿದ ತಾಯ ಮುಖ ಮಾತ್ರ ಇಂದಿಗೂ ಕಾಣದಲ್ಲ".  ಈ ಕೊನೆಯ ಸಾಲುಗಳು ಕವಿಯ ಮಟ್ಟಿಗೆ ತೀರಾ ವೈಯಕ್ತಿಕವಾದ ಭಾವನೆಯಾದರೂ, ಇಲ್ಲಿ ಓದುಗರಿಗೂ ಒಂದು ರೀತಿ ಕೊರತೆ, ಕೊರಗು ಇದೆ.  ಪರಿಸರ ನಾಶವಾಗುತ್ತಿರುವ ಈ ಸಂದರ್ಭದಲ್ಲಿ ನಮಗೂ ಈ ಭೂಮಿ ಇಷ್ಟು ರಮ್ಯವಾಗಿ ಕಾಣುತ್ತಿದ್ದರೂ ಅಲ್ಲಿ ತಾಯ ಮುಖ ಕಾಣದಾಗಿದೆ.  ಸ್ವಾರ್ಥದಲ್ಲಿ ಮುಳುಗಿ ಆ ತಾಯ ಮುಖ ಕಾಣಲಾರದಷ್ಟು ಕುರುಡರಾಗಿದ್ದೇವೆ.  ತಾಯ ಮುಖ ಕಾಣದಷ್ಟು ನಾವು ವಿಕಾರಗೊಳಿಸಿದ್ದೇವೆ.  ಈ ಕವಿತೆಯ ಇನ್ನೊಂದು ಲಕ್ಷಣ ಎಂದರೆ ಕವಿಗಿರುವ ವಿಸ್ಮಯ.  ಹಬ್ಬಿರುವ ಗಿರಿಪಂಕ್ತಿ, ನಕ್ಷತ್ರಗಳು ತುಂಬಿದ ಆಕಾಶ, ಹರಿಯುವ ನದಿ ಇವು ಜಡೆಯನ್ನು ಹೋಲುವುದೇ ಒಂದು ವಿಸ್ಮಯ.  ವಿಸ್ಮಯವಿಲ್ಲದ ಬದುಕು ರಸಹೀನವಾದದ್ದು.  ಆ ವಿಸ್ಮಯವೇ ನಮ್ಮ ಕಲೆಗೆ, ಸಾಹಿತ್ಯಕ್ಕೆ ಸ್ಪೂರ್ತಿ.  ವಿಸ್ಮಯವೇ ಕಲ್ಪನೆಗೆ ಪ್ರೇರಣೆ.  ಕಲ್ಪನೆಯಿಂದ ಕಲೆ ಮತ್ತು ಕವಿತೆ.  

ಈ ಘಟನೆ ನಡೆದದ್ದು ಸುಮಾರು 75 ವರುಷಗಳ ಹಿಂದೆ. ಜಿಎಸ್ಸೆಸ್ ಅವರಿಗೆ ಆಗ ಸುಮಾರು 25 ವರ್ಷ ವಯಸ್ಸು. ಆಗ ಬಿಎ ಓದಲು ಮೈಸೂರಿಗೆ ಬರುತ್ತಾರೆ. ಬಡತನದ ಕಾರಣದಿಂದ ಎಷ್ಟೋ ದಿನಗಳ ಉಪವಾಸ ಅನಿವಾರ್ಯವಾಗುತ್ತದೆ. ಅವರಿಗೆ ಹಾಸ್ಟಲ್ ಅಡ್ಮಿಷನ್ ದೊರೆತಿರಲಿಲ್ಲ. ಹೀಗಾಗಿ ಕಾಲ ಕಾಲಕ್ಕೆ ಊಟ ಸಿಗುತ್ತಿರಲಿಲ್ಲ. ಒಂದು ದಿನ ಅವರು ತಮ್ಮ ಗುರುಗಳಾದ ತ ಸು ಶ್ಯಾಮರಾಯರ ತರಗತಿಯಲ್ಲಿ ಪಾಠ ಕೇಳುತ್ತಿರುವಾಗ ತಲೆ ಸುತ್ತು ಬಂದು ಹಾಗೆ ಡೆಸ್ಕ್ ಮೇಲೆ ತಲೆಯಿಟ್ಟು ಕುಸಿಯುತ್ತಾರೆ. ಶ್ಯಾಮರಾಯರು ಜಿಎಸ್ಸೆಸ್ ಅವರ ಅಸಹಾಯಕತೆಯನ್ನು ಗಮನಿಸಿ ಮನೆಗೆ ಕರೆದೊಯ್ದು, ಜೊತೆಗೆ ಕೂರಿಸಿಕೊಂಡು ಊಟ ಮಾಡುವಂತೆ ಒತ್ತಾಯಿಸುತ್ತಾರೆ. ಅಷ್ಟೇ ಅಲ್ಲ ಈ ಶಿಷ್ಯನನ್ನು ಮುಂದಿನ ಕೆಲವು ದಿನಗಳಲ್ಲಿ ಜೆ.ಎಸ್.ಎಸ್. ಮಠದ ಸ್ವಾಮೀಜಿಯವರ ಬಳಿ ಕರೆದುಕೊಂಡು ಹೋಗಿ ತಮ್ಮ ಶಿಷ್ಯನಿಗೆ ಹಾಸ್ಟೆಲಿನಲ್ಲಿ ತಂಗುವ ವ್ಯವಸ್ಥೆ ಮಾಡಿಕೊಡಬೇಕೆಂದು ಕೇಳಿ ಕೊಳ್ಳುತ್ತಾರೆ. ಸ್ವಾಮೀಜಿ ಒಪ್ಪುತ್ತಾರೆ. ಇದಾದ ಕೆಲವು ದಿನಗಳ ನಂತರ ಜಿಎಸ್ಸೆಸ್ ಹಣದ ಕೊರತೆಯಿಂದಾಗಿ ಫೀಸು ಕಟ್ಟಲು ಸಾಧ್ಯವಾಗುವುದಿಲ್ಲ. ಆಗ ಕಾಲೇಜಿಗೆ ಚಕ್ಕರ್ ಕೊಟ್ಟು ಹಾಸ್ಟೆಲಿನ್ಲಲೇ ಕಾಲ ಕಳೆಯುತ್ತಾರೆ. ಶಿಷ್ಯನ ಗೈರುಹಾಜರಿಯನ್ನು ಗಮನಿಸಿದ ಶ್ಯಾಮರಾಯರು ಜಿಎಸ್ಸೆಸ್ ಗೆ ಕೂಡಲೇ ಬಂದು ತಮ್ಮನ್ನು ಕಾಣುವಂತೆ ಇನ್ನೊಬ್ಬ ಶಿಷ್ಯನ ಮೂಲಕ ಹೇಳಿ ಕರೆಸುತ್ತಾರೆ. ಜಿಎಸ್ಸೆಸ್ ಆಗ ತಮ್ಮ ಆರ್ಥಿಕ ಸಂಕಟವನ್ನು ಗುರುಗಳಲ್ಲಿ ತೋಡಿಕೊಳ್ಳುತ್ತಾರೆ. ಕೂಡಲೇ ಶ್ಯಾಮರಾಯರು ಆಡಳಿತ ಕಚೇರಿಗೆ ಹೋಗಿ ಜಿಎಸ್ಸೆಸ್ ಬೇಡವೆಂದರೂ ಶಿಷ್ಯನ ಪರವಾಗಿ ತಾವೇ ಹಣ ಕಟ್ಟಿ ಫೀಸ್ ತುಂಬುತ್ತಾರೆ. ’ನೋಡು ಶಿವರುದ್ರಪ್ಪ ನೀನು ಇದನ್ನು ಸಾಲವೆಂದು ಪರಿಗಣಿಸು, ಮುಂದಕ್ಕೆ ನಿನಗೆ ಕೆಲಸ ಸಿಕ್ಕಾಗ ಅದನ್ನು ಹಿಂದಕ್ಕೆ ಕೊಡು’ ಎಂದು ಹೇಳುತ್ತಾರೆ. ಮುಂದಿನ ಕೆಲವು ತಿಂಗಳಲ್ಲಿ ಪ್ರತಿಭಾವಂತರಾದ ಜಿಎಸ್ಸೆಸ್ ಸ್ಕಾಲರ್ಶಿಪ್ ಪಡೆದು ಫೀಸ್ ಹಣವನ್ನು ಶ್ಯಾಮರಾಯರಿಗೆ ಹಿಂದಿರುಗಿಸಲು ಹೋದಾಗ, ’ನೀನು ಕೆಲಸಕ್ಕೆ ಸೇರಿದಾಗ ಕೊಡು’ ಎಂದು ನಿರಾಕರಿಸುತ್ತಾರೆ. ಆಗಿನ ಕಾಲಕ್ಕೆ ತ ಸು ಶ್ಯಾಮರಾಯರು ಮತ್ತು ಅವರ ಅಣ್ಣ ವೆಂಕಣ್ಣಯ್ಯನವರು ಮೈಸೂರಿನ ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರು. ವೆಂಕಣ್ಣಯ್ಯನವರು ಕುವೆಂಪು ಅವರ ಗುರುಗಳು! ಈ ಇಬ್ಬರೂ ಮಹನೀಯರು ಬಹಳ ಉದಾರಿಗಳು. ಕರುಣಾಮಯಿಗಳಾದ ಇವರು ತಮ್ಮ ಅನೇಕ ಶಿಷ್ಯರಿಗೆ ಈ ರೀತಿಯ ಆರ್ಥಿಕ ನೆರವು ನೀಡಿ ಕೈ ಹಿಡಿದು ನಡೆಸಿದ್ದಾರೆ. ತ ಸು ಶ್ಯಾಮರಾಯರ ಮತ್ತು ಜಿಎಸ್ಸೆಸ್ ಅವರ ಗುರು ಶಿಷ್ಯ ಸಂಬಂಧ ಆಪ್ತವಾದದ್ದು ಮತ್ತು ಅನನ್ಯವಾದದ್ದು. ಜಿಎಸ್ಸೆಸ್ ಉದಯೋನ್ಮುಖ ಕವಿಯಾಗಿ ಅನೇಕ ಕವಿತೆಗಳನ್ನು ಬರೆಯುತ್ತಾರೆ. ಆ ಕವಿತೆಯನ್ನು ಒಮ್ಮೆ ಓದುವಂತೆ ಮತ್ತು ಅಭಿಪ್ರಾಯಗಳನ್ನು ತಿಳಿಸುವಂತೆ ಶ್ಯಾಮರಾಯರನ್ನು ಕೇಳಿಕೊಳ್ಳುತ್ತಾರೆ. ಶ್ಯಾಮರಾಯರು ತಮ್ಮ ಶಿಷ್ಯನನ್ನು ಚಾಮುಂಡಿ ಬೆಟ್ಟದ ತಪ್ಪಲಿನ ಪ್ರಶಸ್ತವಾದ ಸ್ಥಳಕ್ಕೆ ಕರೆದುಕೊಂಡು ಹೋಗಿ, ಒಂದು ಬಂಡೆಯ ಮೇಲೆ ಆಸೀನರಾಗಿ, ಮೂಗಿಗೆ ನಶ್ಯ ಏರಿಸಿ ತಮ್ಮ ಶಿಷ್ಯನಿಗೆ ಕವನವನ್ನು ಪ್ರಸ್ತುತ ಪಡಿಸಬೇಕೆಂದು ಆದೇಶ ನೀಡುತ್ತಾರೆ. ಜಿಎಸ್ಸೆಸ್ ತಮ್ಮ ಅನೇಕ ಕವಿತೆಗಳನ್ನು ಗುರುಗಳ ಮುಂದೆ ಪ್ರಸ್ತುತಪಡಿಸುತ್ತಾರೆ. ಗುರುಗಳು ತಾಳ್ಮೆಯಿಂದ ಶಿಷ್ಯನ ಎಲ್ಲ ಕವನಗಳನ್ನು ಕೇಳಿಸಿಕೊಂಡು ಅದನ್ನು ಮೆಚ್ಚುತ್ತಾರೆ, ಇನ್ನೂ ಹೆಚ್ಚು ಬರೆಯಲು ಪ್ರೋತ್ಸಾಹ ನೀಡುತ್ತಾರೆ. ಶಿಷ್ಯನಿಗೆ ಗುರುಗಳ ಈ ಮಾರ್ಗದರ್ಶನ ಅಮೂಲ್ಯವಾಗುತ್ತದೆ. ಶಿಷ್ಯ, ಗುರುಗಳಿಗೆ ಕೃತಜ್ಞತೆಯನ್ನು "ತೃಪ್ತಿ" ಎಂಬ ಶೀರ್ಷಿಕೆ ಉಳ್ಳ ವಿಶೇಷ ಕವಿತೆಯ ಮೂಲಕ ಅರ್ಪಿಸುತ್ತಾನೆ. ಶಿಷ್ಯ ಎದೆತುಂಬಿ ಹಾಡುತ್ತಾನೆ, ಗುರುಗಳು ಮನವಿಟ್ಟು ಕೇಳುತ್ತಾರೆ. ಶಿಷ್ಯ ಹಾಡು ಹಕ್ಕಿಯಾಗುತ್ತಾನೆ, "ಇಂದು ನಾ ಹಾಡಿದರು ಅಂದಿನಂತೆಯೇ ಕುಳಿತು ಕೇಳುವಿರಿ ಸಾಕೆನಗೆ ಅದುವೇ ಬಹುಮಾನ, ಹಾಡುಹಕ್ಕಿಗೆ ಬೇಕೆ ಬಿರುದು ಸನ್ಮಾನ, ಯಾರು ಕಿವಿ ಮುಚ್ಚಿದರು ನನಗಿಲ್ಲ ಚಿಂತೆ" ಎಂಬ ನಿರ್ಲಿಪ್ತ ನಿಲುವನ್ನು ವ್ಯಕ್ತಪಡಿಸುತ್ತಾನೆ.

ಈ ಕವಿತೆ ಮುಂದಕ್ಕೆ "ಎದೆ ತುಂಬಿ ಹಾಡಿದೆನು" ಎಂಬ ಭಾವಗೀತೆಯಾಗಿ ಅತ್ಯಂತ ಜನಪ್ರಿಯವಾಗುತ್ತದೆ. ಈ ಕವಿತೆ ಹೀಗಿದೆ:
ತೃಪ್ತಿ

ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು
ಇಂದು ನಾ ಹಾಡಿದರು ಅಂದಿನಂತೆಯೇ ಕುಳಿತು
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ
ಹಾಡು ಹಕ್ಕಿಗೆ ಬೇಕೆ ಬಿರುದು ಸನ್ಮಾನ?

ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ
ಕೇಳುವವರಿಹರೆಂದು ನಾಬಲ್ಲೆನದರಿಂದ
ಹಾಡುವೆನು ಮೈದುಂಬಿ ಎಂದಿನಂತೆ
ಯಾರು ಕಿವಿ ಮುಚ್ಚಿದರು ನನಗಿಲ್ಲ ಚಿಂತೆ
ಈ ಕವಿತೆಗೆ ರಾಗ ಸಂಯೋಜನೆ ಮಾಡಿದವರು ಮೈಸೂರು ಅನಂತಸ್ವಾಮಿಯವರು.  ಜಿಎಸ್ಸೆಸ್ ಇದನ್ನು ಬರೆದು 75 ವರ್ಷಗಳಾಗಿದ್ದರೂ ಇಂದಿಗೂ ಈ ಗೀತೆ ಅತ್ಯಂತ ಜನಪ್ರಿಯವಾಗಿದೆ.  ಎರಡೇ ಪಂಕ್ತಿಯ, ಕೇವಲ 10 ಸಾಲುಗಳ ಕವಿತೆ ಸರಳವಾಗಿ ದಟ್ಟವಾಗಿದೆ.  ಕವಿ ಇಲ್ಲಿ ಎಲ್ಲ ಓದುಗರಿಗೂ ಮತ್ತು ಕೇಳುಗರಿಗೂ ಕೃತಜ್ಞರಾಗಿದ್ದಾರೆ.  ಇದರಲ್ಲಿ ಭಗವದ್ಗೀತೆಯ ಕೆಲವು ಸಾಲುಗಳ ಛಾಯೆಯನ್ನು ಗುರುತಿಸಬಹುದು.  ಜಿಎಸ್ಸೆಸ್ ಆ ವಯಸ್ಸಿನಲ್ಲಿ ತಮ್ಮ ಕಷ್ಟಗಳ ಮಧ್ಯೆ ಭಗವದ್ಗೀತೆಯನ್ನು ಓದಿ ತಿಳಿದಿರುವ ಮತ್ತು ಅದರ ಪ್ರಭಾವದಿಂದ ರಚಿಸಿರುವ ಸಾಧ್ಯತೆ ಕಡಿಮೆ.  ಹೀಗಾಗಿ ಇದು ಬದುಕಿನ ಅನುಭವದಿಂದ ಮೂಡಿಬಂದಿರುವ ಸಾಲುಗಳಿರಬಹುದು.  ಕರ್ಮ ಎಂಬುದನ್ನು ಇಲ್ಲಿ ಕಾಯಕವೆಂದು ಅರ್ಥಮಾಡಿಕೊಳ್ಳಬೇಕು.  ಕಾಯಕ ಅನಿವಾರ್ಯ, ಅದನ್ನು ನಿರಪೇಕ್ಷೆಯಿಂದ ಶ್ರದ್ಧೆಯಿಂದ ಮಾಡುವ ಆಶಯವನ್ನು ಕವಿ ವ್ಯಕ್ತಪಡಿಸಿದ್ದಾರೆ. ಎಷ್ಟೋ ಬಾರಿ ನಮ್ಮ ಬದುಕಿನ ಕಥೆ-ವ್ಯಥೆಗಳನ್ನು ತಾಳ್ಮೆಯಿಂದ ಕೇಳುವವರಿದ್ದರೆ ಸಾಕು ಎನಿಸುತ್ತದೆ.  ನಮ್ಮ ಅಳಲನ್ನು ತೋಡಿಕೊಂಡಾಗ ಹೃದಯ ಹಗುರವಾಗುವುದು ಸಹಜ.  ಒಬ್ಬ ಶಿಷ್ಯನಿಗೆ ತನ್ನ ಗುರುವಿನಿಂದ ಪ್ರಶಂಸೆ ದೊರಕಿದರೆ ಅಷ್ಟೇ ಸಾಕು ಅದಕ್ಕಿಂತ ಹೆಚ್ಚಿನ ಬಹುಮಾನ ಏನಿದೆ?  ಹಕ್ಕಿ ಇಲ್ಲಿ ಅತ್ಯಂತ ಪರಿಣಾಮಕಾರಿಯಾದ ರೂಪಕವಾಗಿ ನಿಲ್ಲುತ್ತದೆ.  ಆ 'ಹಕ್ಕಿ' ಒಬ್ಬ ವೈದ್ಯನಾಗಿರಬಹುದು, ಒಬ್ಬ ಸರ್ಕಾರಿ ಸಾಹೇಬನಾಗಿರಬಹುದು ಅಥವಾ ಒಬ್ಬ ಕಲಾವಿದನಾಗಿರಬಹುದು.  ಹಕ್ಕಿಗೆ ತನ್ನ ಅನಿವಾರ್ಯ ಕಾಯಕವನ್ನು ಮಾಡುವ ಈ ಸಂದರ್ಭದಲ್ಲಿ ಉಂಟಾಗುವ ಭಾವ ಎಲ್ಲರಿಗೂ ಅನ್ವಯವಾಗುತ್ತದೆ.  ಈ ಕವಿತೆ ವಿಶೇಷವಾಗಿ ಗಾಯಕ - ಗಾಯಕಿಯರಿಗೆ ಹೆಚ್ಚು ಪ್ರಸ್ತುತವಾಗಿದೆ.  'ಹಾಡು ಹಕ್ಕಿ' ಎನ್ನುವ ಇಲ್ಲಿಯ ಉಲ್ಲೇಖ ಅದಕ್ಕೆ ಕಾರಣವಾಗಿದೆ.  ಅನೇಕ ಸುಗಮ ಸಂಗೀತ ಕಾರ್ಯಕ್ರಮಗಳಲ್ಲಿ ಈ ಭಾವಗೀತೆಯನ್ನು ಕೊನೆಯಲ್ಲಿ ಪ್ರಸ್ತುತಪಡಿಸುವ ಸಂಪ್ರದಾಯವನ್ನು ಕಲಾವಿದರು ರೂಢಿಮಾಡಿಕೊಂಡಿದ್ದಾರೆ. 

ತಾಯಿಯನ್ನು ಕಳೆದುಕೊಂಡು ತಬ್ಬಲಿಯಾಗಿ 'ಕಂಡ ಕಂಡ ಹೆಣ್ಣ ಮೊಗದಿ ತಾಯಿಯನ್ನು ಅರಸುತ್ತ' ಕೊನೆಗೆ 'ಜಡೆಯಾಚೆ ತಿರುಗಿಸಿದ ತಾಯ ಮುಖ ಕಾಣದಲ್ಲ' ಎಂದು ಪರಿತಪಿಸಿದ ಯುವಕ ಜಿಎಸ್ಸೆಸ್ ಅವರಿಗೆ ತಾಯ್ತನದ, ಮಾತೃವಾತ್ಸಲ್ಯದ ಇನ್ನೊಂದು ಸ್ವರೂಪ ಕಂಡದ್ದು ಅವರ ಗುರುಗಳಾದ ತ ಸು ಶ್ಯಾಮರಾಯರಲ್ಲಿ! ಜಿಎಸ್ಸೆಸ್ ಅನೇಕ ಕಡೆ ಹೇಳಿರುವ ಹಾಗೆ ಅವರ ಕಾವ್ಯ ಪರಿಶ್ರಮಕ್ಕೆ "ಕುವೆಂಪು ಗಾಳಿ ಬೆಳಕಾಗಿದ್ದರೆ ಶ್ಯಾಮರಾಯರು ನೆಲ ಮತ್ತು ನೀರು".

ಮುಂದಕ್ಕೆ ಶ್ಯಾಮರಾಯರು ಬರೆದ 'ಮೂರು ತಲೆಮಾರು' ಎಂಬ ಕೃತಿಯ ಮರುಮುದ್ರಣಕ್ಕೆ ಮುನ್ನುಡಿ ಬರೆದವರು ಜಿಎಸ್ಸೆಸ್! ಇಷ್ಟು ಹೊತ್ತಿಗೆ ಖ್ಯಾತ ಕವಿಯಾಗಿ, ಪ್ರೌಢ ವಿದ್ವಾಂಸರಾಗಿ, ಪ್ರಾಧ್ಯಾಪಕರಾಗಿದ್ದ ಜಿಎಸ್ಸೆಸ್ ಅವರು ಈ ಕೃತಿಯ ಮುನ್ನುಡಿಯಲ್ಲಿ ಹೀಗೆ ಬರೆಯುತ್ತಾರೆ; "ಶ್ರೀ ತ ಸು ಶ್ಯಾಮರಾಯರು ನನ್ನ ಪಾಲಿಗೆ ಕೇವಲ ಅಧ್ಯಾಪಕರಲ್ಲ; ನನ್ನ ಹಾಗು ನನ್ನಂಥ ಅನೇಕರ ವ್ಯಕ್ತಿತ್ವಕ್ಕೆ ನೀರೆರೆದು ಬೆಳಸಿದ ವಾತ್ಸಲ್ಯದ ಪ್ರತಿಮಾಸ್ವರೂಪರು"

ಶ್ಯಾಮರಾಯರು ಮತ್ತು ಜಿಎಸ್ಸೆಸ್ ನೆನಪಿನಲ್ಲಿ ಉಳಿಯುವ ಆದರ್ಶ ಗುರು-ಶಿಷ್ಯರು. ಅವರ ಬದುಕು ನಮಗೆ ಆದರ್ಶವಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಜಿಎಸ್ಸೆಸ್ ಶತಮಾನೋತ್ಸವ (7ನೆ ಫೆಬ್ರುವರಿ, 2026) ಇರುವುದರ ಹಿನ್ನೆಲೆಯಲ್ಲಿ ನಾನು ಮೇಲಿನ ವಿಚಾರಗಳನ್ನು ದಾಖಲಿಸಿದ್ದೇನೆ. ಜಿಎಸ್ಸೆಸ್ ಅವರ ಮಗನಾಗಿ ನಾನು ಈ ಬರಹವನ್ನು ಲೇಖನಿಯಿಂದ ಪುಟಗಳಲ್ಲಿ ಮೂಡಿಸುತ್ತಿರುವಾಗ ಅಪ್ಪನ ಬಗ್ಗೆ ಮಗನೇ ಬರೆಯುವುದು ಎಷ್ಟು ಸಮಂಜಸ ಎಂಬ ಭಾವನೆ ಮೂಡಿ ಬಂತು. ಅಲ್ಲಿ ಮುಜುಗರ ಉಂಟಾದರೂ ನನ್ನ ಒಳ ಮನಸ್ಸು, ನಾನು ಅವರ ಮಗನಾಗಿರುವುದು ನನ್ನ ಹುಟ್ಟಿನ ಆಕಸ್ಮಿಕವೆಂದೂ, ಅದಕ್ಕಿಂತ ಹೆಚ್ಚಾಗಿ ನಾನು ಅವರ ಅಭಿಮಾನಿಯೆಂದೂ, ಸಾಹಿತ್ಯಸಕ್ತನೆಂದೂ ಅವರ ಬರಹದಿಂದ ಪ್ರಭಾವಿತನಾದ ಒಬ್ಬ ಸಾಮಾನ್ಯನೆಂದೂ ಸಮರ್ಥನೆ ನೀಡಿತು. ನನ್ನ ಬಾಂಧವ್ಯದ ಚೌಕಟ್ಟಿನ ಹೊರಗೆ ನಿಂತು ಜಿಎಸ್ಸೆಸ್ ಅಭಿಮಾನಿಯಾಗಿ ಅವರ ಶತಮಾನೋತ್ಸವ ಸಂದರ್ಭದಲ್ಲಿ ಅವರ ಬದುಕಿನ ಕೆಲವು ವೈಯುಕ್ತಿಕ ವಿಚಾರಗಳನ್ನು, ಅದಕ್ಕೆ ಸಂಬಂಧಪಟ್ಟ ಕೆಲವು ಕವಿತೆಗಳನ್ನು ಇಲ್ಲಿ ಹಂಚಿಕೊಂಡಿದ್ದೇನೆ. ಈ ರೀತಿಯ ಒಳನೋಟಗಳು ಪರಿವಾರದವರಿಂದ ಬಂದಾಗ ಅದು ಮೌಲಿಕವಾಗಿರುತ್ತದೆ ಎಂಬ ವಿಚಾರ ಕೂಡ ಈ ಬರವಣಿಗೆಗೆ ಪ್ರೇರಣೆ ನೀಡಿದೆ.

***
ಗಮನಿಸಿ:
ಜಡೆ ಕವನದ ಪೂರ್ಣ ಆವೃತ್ತಿ ಮತ್ತು ಅದನ್ನು ವಾಚನ ಮಾಡಿರುವ ಅನಿವಾಸಿ ಬಳಗದ ಅಮಿತಾ ರವಿಕಿರಣ್ ಅವರ ವೀಡಿಯೊ ಲಿಂಕ್ ಕೆಳಗಿದೆ, ಅದನ್ನು ಒತ್ತಿ ಕೇಳಬಹುದು. ವೀಡಿಯೊ ಸಹಕಾರಕ್ಕಾಗಿ ಅಮಿತಾ ಮತ್ತು ಡಾ ದೇಸಾಯಿಯವರಿಗೆ ಕೃತಜ್ಞತೆಗಳು. ಅದನ್ನು ಪ್ರಕಟಿಸಿದ ಡಾ ಗುಡೂರ್ ಅವರಿಗೂ ಧನ್ಯವಾದಗಳು.
ಈ ಬರಹಕ್ಕೆ ಒಪ್ಪುವಂತಹ ರೇಖಾ ಚಿತ್ರವನ್ನು ಬರೆದು ಕೊಟ್ಟ ಡಾ ಲಕ್ಷ್ಮೀನಾರಾಯಣ ಗುಡೂರ್ ಅವರಿಗೆ ಕೃತಜ್ಞತೆಗಳು.
ಉಲ್ಲೇಖನಕ್ಕೆ ಬಳಸಿಕೊಂಡ ಕೃತಿಗಳು; ಜಿ ಎಸ್ ಎಸ್ ಅವರ 'ಚತುರಂಗ' (ಅಸಮಗ್ರ ಆತ್ಮಕಥನ) ಮತ್ತು ಸಮಗ್ರಕಾವ್ಯ.

*****************************************************************