ವರಮನೋಹರೆ ಕೇಳು ಪಾರಿಜಾತವಿದು – ಯೋಗೀಂದ್ರ ಮರವಂತೆ

ಆಶ್ವೀಜ ಮಾಸದ ಸಂಜೆಯ ಹೊತ್ತಿಗೆ ಮರವಂತೆ ಮನೆಯ ಹೊರಗೆ ಯಾರದೋ  ಕಾಲ ಸದ್ದು ಕೇಳಿದರೂ ಇವರೇ ಬಂದರೇನೋ ಎಂದು ರೋಮಾಂಚನಗೊಳ್ಳುವುದು; ಬಗಲಿಗೆ ಮದ್ದಳೆ, ಹಾರ್ಮೋನಿಯಂ ಧರಿಸಿದ ಗುಂಪು , ಕೈಯಲ್ಲಿ ಅಲಂಕಾರಗೊಂಡ ಪುಟ್ಟ ಕೋಲನ್ನು ಹಿಡಿದ ಇಬ್ಬರು ಮಕ್ಕಳನ್ನು ಕೂಡಿಕೊಂಡು  ಮನೆಯ ಗೇಟು ದೂಡಿಕೊಂಡು ಯಾವಾಗ ಒಳಬರುತ್ತಾರೆ ಎಂದು ಕಾಯುವುದು. ನಮ್ಮಮನೆಗೆ ಬರುವ ಮೊದಲು ಮದ್ದಳೆಯ ‘ತೋಂ ತೋಂ’ ನೆರೆಮನೆಯಲ್ಲಿ ಕೇಳುವಾಗ, ಇನ್ನೊಂದು ಅರ್ಧ ಘಂಟೆಯಲ್ಲಿ ಇವರು ನಮ್ಮ ಮನೆಗೂ ಬರುತ್ತಾರಲ್ಲ ಎಂಬ ಖುಷಿಯಲ್ಲಿ ನಿಂತಲ್ಲಿ ನಿಲ್ಲಲಾಗದೆ , ಬಾಗಿಲ ಅಡ್ಡ ನಿಂತು ಎರಡು ತೈ ತೈ ಹೆಜ್ಜೆ ಹಾಕುವುದು.  ಕೇರಿಯ ಮಕ್ಕಳಿಗೆ ನವರಾತ್ರಿ ಎಂದರೆ  ಪ್ರತೀಕ್ಷೆಯಾದ ನನ್ನ ಬಾಲ್ಯ ಕಾಲದ  ನೆನಪುಗಳಿವು. ನರಸಿಂಹದಾಸರ ತಂಡದ ಹರಿದ ಚಪ್ಪಲಿಗಳ ಚರಪರ ಸದ್ದು, ಇನ್ನೊಂದು ಮನೆಯಲ್ಲಿ ಹಾಡಲು ಸಿದ್ಧ ಆಗುತ್ತಿರುವಾಗ ಅವರ ಹೊಟ್ಟೆಯಿಂದ ಗಂಟಲವರೆಗೆ ತುಂಬಿಕೊಂಡು ಹೊರಬರುವ ಕೆಮ್ಮು , ನಮ್ಮ ಮನೆಯ ಆವರಣದ  ಒಳಗೆ ಕೇಳಿಸಿತೆಂದರೆ ಮೈಯೆಲ್ಲಾ ಕಿವಿಯಾಗಿ , ಮನಸೆಲ್ಲ ಖಾಲಿಯಾಗಿ ನಾವು ತಯಾರು.

“ಗುರುದೈವ ಗಣಪತಿಗೆ ಶರಣು ಶರಣೆಂದು ” ಎನ್ನುತ್ತಾನೆ ಕುಳಿತ ಒಬ್ಬ ಹುಡುಗ
“ಲೇಸಾಗಿ ಹರಸಿದರು ಬಾಲಕರು ಬಂದು …” ಎಂದು ಮೊದಲಿನವನ ಎದುರು ಕುಳಿತ ಇನ್ನೊಬ್ಬ ಹುಡುಗ .

ಬಿಳಿ ಟೊಪ್ಪಿ, ಬಿಳಿ ವಸ್ತ್ರ  ಧರಿಸಿ, ಬೆಂಡು ಬಣ್ಣದ ಕಾಗದಗಳಿಂದ ಅಲಂಕಾರಗೊಂಡ ಹೂವಿನ ಕೋಲನ್ನು ಹಿಡಿದು ಎದುರು ಬದುರು ಕುಳಿತ ಮಕ್ಕಳಿಬ್ಬರು ಸವಾಲು ಜವಾಬುಗಳ ಧಾಟಿಯಲ್ಲಿ ಹೇಳುವ ಚೌಪದಿಯ  ಸಾಲುಗಳವು. ಅದು ಮುಗಿಯುವ ಹೊತ್ತಿಗೆ, ಮಕ್ಕಳ ಹತ್ತಿರದಲ್ಲಿ ಕುಳಿತ ನರಸಿಂಹದಾಸರು ಶ್ರುತಿ ಮೀಟುವವನ ಕಡೆಗೊಮ್ಮೆ , ಮದ್ದಲೆಗಾರನ ಕಡೆಗೊಮ್ಮೆ ಓರೆ ನೋಟ ಬೀರಿ , ಗತ್ತಿನಲ್ಲಿ ಹಾಡು ಆರಂಭಿಸುತ್ತಾರೆ ….

” ವಹ್ಹವ್ವಾರೆ ನೋಡಿರೋ ಈ ಕಡೆಯ
ಬಹ ನಾರಿ ಯಾರ್ ಇವಳು ನೀವ್ ಪೇಳಿರಯ್ಯ ,
ಉಡುಗಳ ಮಧ್ಯದಿ ಶಶಿಯಂತೆ
ಸ್ತ್ರೀಯರ ನಡುವೆ ದಂಡಿಗೆ ಏರಿ ಮಿಂಚಿನಂತೆ “

ಉದ್ಯಾನವದಲ್ಲಿ ಸಖಿಯರೊಂದಿಗೆ ತಿರುಗುತ್ತಿರುವ ಚಂದ್ರಾವಳಿಯನ್ನು ಮರೆಯಲ್ಲಿ ನಿಂತು ನೋಡಿದ ಕೃಷ್ಣ ,ಗೆಳೆಯರೊಂದಿಗೆ ಆಡುವ ಮಾತುಗಳಿವು. ಅವಳ ಸೌಂದರ್ಯಕ್ಕೆ ಸೋತವನು, ನಂತರ ಧೈರ್ಯ ಮಾಡಿ ಚಂದ್ರಾವಳಿಯ ಎದುರಿಗೇ ಬಂದು ನಿಂತು, ಅಳುಕು, ಭಂಡತನ, ಪ್ರೀತಿ, ಸೇರಿದ ಭಾವದಲ್ಲಿ ತನಗುಂಟಾಗಿರುವ ಪ್ರೇಮವನ್ನು ತಿಳಿಸುತ್ತಾನೆ. “ಭಳಿರೆ ಚಂದ್ರಾವಳಿ ನಿನ್ನನು ಕಾಣದೆ ಕಳವಳಿಸಿದೆ ಮನವು ….” ಎಂದು ಆ ಸಂದರ್ಭಕ್ಕೆ ಭಾಗವತರು ಹಾಡುತ್ತಾರೆ. ಕೃಷ್ಣ ಮತ್ತು ಚಂದ್ರಾವಳಿಯರ ಪಾತ್ರವಾಗಿರುವ ಮಕ್ಕಳು ಹಾಡುಗಳಿಗೆ ಅನುಗುಣವಾಗಿ  ಸಂಭಾಷಿಸುತ್ತಾರೆ.  ರಾಧೆಯ ತಂಗಿ ಚಂದ್ರಾವಳಿಯನ್ನು, ಕೃಷ್ಣನು ಕಾಡುವ ಶೃಂಗಾರಭರಿತ ಸನ್ನಿವೇಶ ಇರುವ  “ಚಂದ್ರಾವಳಿ ವಿಲಾಸ”  ಪ್ರಸಂಗದ ಕಥೆ ಹೀಗೆ “ಹೂವಿನ ಕೋಲು” ಎಂದು ಕರೆಯಲ್ಪಡುವ ಯಕ್ಷಗಾನದೊಳಗಿನ ಸಣ್ಣ ಪ್ರಕಾರದ ಮೂಲಕ ಮುಂದುವರಿಯುತ್ತದೆ. ಯಕ್ಷಗಾನ ತಾಳಮದ್ದಳೆಯಲ್ಲಿ ಕಾಣುವಂತಹ  ಕಥಾ ವಿಸ್ತಾರ, ಪಾತ್ರ ಚಿತ್ರಣ, ಪಾಂಡಿತ್ಯ, ಜಿಜ್ಞಾಸೆ, ವಿಮರ್ಶೆಗಳಿಗೆ  “ಹೂವಿನ ಕೋಲು” ಹೋಲಿಕೆ ಅಲ್ಲದಿದ್ದರೂ ವೇಷವನ್ನು ಧರಿಸದೇ ಎದುರು ಬದುರು ಕುಳಿತು, ಭಾಗವತರ ಹಾಡನ್ನು ಹೊಂದಿಕೊಂಡು ಪಾತ್ರಗಳಾಗಿ ಮಾತನಾಡುವ ಕಾರಣಕ್ಕೆ ತಾಳಮದ್ದಲೆಯನ್ನು ಈ ಪ್ರಕಾರ ನೆನಪಿಸುತ್ತದೆ.  “ಹೂವಿನ ಕೋಲು” ಸಂಪ್ರದಾಯದಲ್ಲಿ, ಯಕ್ಷಗಾನ ಪ್ರಸಂಗಗಳ ಸಣ್ಣ
ತುಣುಕುಗಳನ್ನು ಆಯ್ದು, ಚಿಕ್ಕ ಮಕ್ಕಳನ್ನು ತರಬೇತುಗೊಳಿಸುತ್ತಾರೆ. ಅವರನ್ನು ಕರೆದುಕೊಂಡು ನವರಾತ್ರಿಯ ಸಮಯದಲ್ಲಿ ಊರೆಲ್ಲ ತಿರುಗುತ್ತಾರೆ. ಪಾರಿತೋಷಕವಾಗಿ ಹಣ ತೆಂಗಿನಕಾಯಿ ಅಕ್ಕಿಯನ್ನು  ಪಡೆಯುತ್ತಾರೆ.

ನರಸಿಂಹದಾಸರು ಯಕ್ಷಗಾನ ಮೇಳಗಳಲ್ಲಿ ಹಾಡುವುದು ದುರಾದೃಷ್ಟವಶಾತ್ ನಿಲ್ಲಿಸಿದ ಮೇಲೆ, ನವರಾತ್ರಿಗೆ ಹೂವಿನಕೊಲಿನ ತಂಡ ಕಟ್ಟಿಕೊಂಡು ತಿರುಗುತ್ತಿದ್ದರು. ಹಾಗಾಗಿಯೇ ನರಸಿಂಹ ದಾಸರ ನೆನಪಾದಾಗಲೆಲ್ಲ ನವರಾತ್ರಿಯಲ್ಲಿ ಅವರು ಮನೆಗೆ ಬರುತ್ತಿದ್ದ ದಿನಗಳ
ನೆನಪಾಗುತ್ತದೆ.  ಒಂದು ಕಾಲಕ್ಕೆ ಯಕ್ಷಗಾನದ ತೆಂಕು ಬಡಗು ತಿಟ್ಟುಗಳ ಅಪೂರ್ವಸಿದ್ಧಿಯೊಂದಿಗೆ ಅಪ್ರತಿಮ ಭಾಗವತರೆನಿಸಿಕೊಂಡಿದ್ದ (ಯಕ್ಷಗಾನ ಹಾಡುಗಾರ ಮತ್ತು ಸೂತ್ರಧಾರ)  ನರಸಿಂಹದಾಸರು ಬದುಕಿನ ಕೊನೆಯ ಮೂವತ್ತು ವರ್ಷಗಳಲ್ಲಿ ಯಕ್ಷಗಾನದೊಟ್ಟಿಗೆ
ನಿರಂತರ ಸಂಬಂಧ ಇಟ್ಟುಕೊಂಡದ್ದು ನವರಾತ್ರಿಯ ಹೂವಿನಕೋಲಿನ ಮೂಲಕ ಮಾತ್ರ. ನರಸಿಂಹದಾಸರು ಕಲಾಸಂಪನ್ನತೆಯ  ಉತ್ತುಂಗದ ದಿನಗಳಲ್ಲಿ ಇರುವಾಗಲೇ ತಮ್ಮ ಅತ್ಯಮೂಲ್ಯವಾದ ಧ್ವನಿಯನ್ನು ಕಳೆದು ಕೊಂಡವರು. ಇಂದಿಗೆ ಸುಮಾರು 70 ವರ್ಷಗಳ ಹಿಂದೆ,
ಧ್ವನಿವರ್ಧಕಗಳು ಇಲ್ಲದ ಕಾಲದ ರಾತ್ರಿ ಬೆಳಗಿನವರೆಗೆ ಯಕ್ಷಗಾನ. ಇನ್ನು ಎರಡು ಮೇಳಗಳು ಜಿದ್ದಿನಲ್ಲಿ ಪ್ರದರ್ಶಿಸುವ ಜೋಡಾಟಗಳಲ್ಲಂತೂ ಎದುರಿನ ಮೇಳದ ಸದ್ದನ್ನು ಅಡಗಿಸಿ ದೂರದೂರದವರೆಗೆ ತನ್ನ ಕಂಠವನ್ನು ಮುಟ್ಟಿಸ ಬೇಕಾದ ಅನಿವಾರ್ಯತೆ, ಅವರ ಅತ್ಯಂತ ಬೇಡಿಕೆಯ ದಿನಗಳಾದ್ದರಿಂದ ಅವಿರತ ತಿರುಗಾಟ. ಮತ್ತೆ ಆಟ ಮುಗಿದ ಮೇಲೆ ಬೆಳಿಗ್ಗೆ ನಿದ್ರೆ ಮಾಡುವ ಗೋಜಿಗೆ ಹೋಗದೆ ಅನಾರೋಗ್ಯದ ದಿನಗಳನ್ನು ಹತ್ತಿರ ತರುವಂತಹ ಕಾಲಹರಣದ ಮಾಧ್ಯಮಗಳ ಸಹವಾಸ, ತನ್ನ ಪ್ರತಿಭೆಯ ಬಗ್ಗೆ ಅವರಿಗೇ  ಇದ್ದ ನಿರ್ಲಕ್ಷ್ಯ ಅಸಡ್ಡೆ … ಇಂತಹ ದಿನಚರಿ-ದುಡಿತದಲ್ಲಿ ನರಸಿಂಹದಾಸರ ಸುಸ್ವರ ಅನಿರೀಕ್ಷಿತವಾಗಿ ಬಿದ್ದುಹೋಯಿತು. ಮಾತನಾಡಿದರೂ ಕ್ಷೀಣವಾಗಿ ಕೇಳಿಸುವಂತಹ ಭಗ್ನ ಸ್ವರೂಪಕ್ಕೆ
ಮಾರ್ಪಾಟಾಯಿತು. ಇಂತಹ  ಆಕಸ್ಮಿಕ ಸನ್ನಿವೇಶದಲ್ಲಿ ಮೇಳಗಳ ತಿರುಗಾಟದಿಂದ ಅವರು ಹೊರಬರಬೇಕಾಯಿತು .

ಮರವಂತೆ ನರಸಿಂಹದಾಸರು, ಯಕ್ಷಗಾನ ವಲಯದಲ್ಲಿ ಕರೆಯಲ್ಪಡುತ್ತಿದ್ದುದು ದಾಸ ಭಾಗವತರೆಂದು. 1955-70 ರ ನಡುವೆ ದಾಸಭಾಗವತರು ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪ್ರಮುಖ ಯಕ್ಷಗಾನ ಮೇಳಗಳಲ್ಲಿ ಮುಖ್ಯ ಭಾಗವತರಾಗಿ
ಅಲ್ಲದಿದ್ದರೆ ಅತಿಥಿ ಕಲಾವಿದರಾಗಿ ಭಾಗವಹಿಸುತ್ತಿದ್ದರು. ಆಗ ದಾಸಭಾಗವತರ ಆಟ ಎಂದರೆ ಜನರು ದುಂಬಾಲು ಬೀಳುತ್ತಿದ್ದರಂತೆ. ಸಾರಿಗೆ ಸಂಪರ್ಕ ಸುಸೂತ್ರ ಇಲ್ಲದ ಕಾಲದಲ್ಲಿ, ಕಾರು ಮಾಡಿಕೊಂಡಾದರೂ ಅವರ ಆಟ ನೋಡಿ ಬರುತ್ತಿದ್ದವರ ದೊಡ್ಡ ಸಂಖ್ಯೆ ಇತ್ತಂತೆ. ತೆಂಕು ಮತ್ತು ಬಡಗು ತಿಟ್ಟುಗಳಲ್ಲಿ ಅದ್ಭುತವಾಗಿ ಹಾಡಬಲ್ಲವರಾಗಿದ್ದ ದಾಸಭಾಗವತರು, ಬಡಗು ತಿಟ್ಟಿನೊಳಗಿನ ವಿಶಿಷ್ಟ ಪ್ರಬೇಧಗಳಾದ ಬಡಾಬಡಗು  ಮತ್ತು ಕುಂದಾಪುರ ಮಟ್ಟು ಎರಡನ್ನೂ ಸಮವಾಗಿ ನಿರ್ವಹಿಸಬಲ್ಲವರಾಗಿದ್ದರು. ಮೂವತ್ತಕ್ಕಿಂತ ಹೆಚ್ಚು ಪ್ರಸಂಗಗಳ ಕಂಠಪಾಠ, ತಾವೇ ಬೆಳೆಸಿಕೊಂಡ ಯಕ್ಷಗಾನಕ್ಕೊಪ್ಪುವ ಆಕರ್ಷಕ ಹಾಡಿನ ಶೈಲಿ, ಸಮುದ್ರದ ಭೋರ್ಗರೆತಕ್ಕೆ ಹೋಲಿಸಲ್ಪಡುತ್ತಿದ್ದ ತುಂಬು ಸ್ವರ, ಅಪ್ರತಿಮ ಲಯ ಸಿದ್ಧಿ ಮತ್ತು
ರಂಗಸ್ಥಳದ ಮೇಲಿನ ಬಿಗಿ ಹಿಡಿತಗಳಿಂದ ಅಪಾರ ಯಕ್ಷಗಾನ ಪ್ರೇಮಿಗಳ ಮಾತ್ರವಲ್ಲದೇ ಯಕ್ಷಗಾನದ ಇತಿಹಾಸದಲ್ಲಿ ಅತ್ಯಂತ ಹೆಸರು ಗೌರವ ಪಡೆದ ಕಲಾವಿದರ ಮೆಚ್ಚಿನ ಭಾಗವತರು ಕೂಡ ಆಗಿದ್ದರು. ಆ ಸಮಯದಲ್ಲಿ ಮೋಡಿಯ ಕುಣಿತ, ಭಾವಪೂರ್ಣ ಅಭಿನಯಗಳಿಂದ ಪ್ರೇಕ್ಷಕರಿಗೆ ವಿದ್ಯುತ್ ಸಂಚಾರ ಮಾಡಿಸುತ್ತಿದ್ದ ಕೆರೆಮನೆ ಶಿವರಾಮ ಹೆಗಡೆ (ಬಡಾಬಡಗು ಶೈಲಿ ) ಮತ್ತು ಅದ್ಭುತ ಚಲನೆಯ ವಿಶಿಷ್ಟ ಕುಣಿತದ ಕಲಾವಿದ ಎನ್ನುವ ಕೀರ್ತಿ ಇದ್ದ ವೀರಭಧ್ರನಾಯ್ಕರನ್ನು (ಕುಂದಾಪುರದ ಮಟಪಾಡಿ ಮಟ್ಟು ) ದಾಸ ಭಾಗವತರು ಕುಣಿಸಿದವರು. ನರಸಿಂಹದಾಸರ ಭಾಗವತಿಕೆಗೆ ತಿಮ್ಮಪ್ಪ ನಾಯ್ಕರ ಮದ್ದಳೆ, ಯಕ್ಷಗಾನ ಹಿಮ್ಮೇಳದಲ್ಲಿ ಜನರು ಬಯಸುವ ಚಿರಂತನ ಜೋಡಿಯಾಗಿತ್ತು. ದಾಸಭಾಗವತರ ಕಲಾ ಜೀವನದ ಉಚ್ಚ್ರಾಯದ ಕಥೆಗಳನ್ನು ನಮ್ಮ ಹಿಂದಿನ ತಲೆಮಾರಿನ ಪ್ರೇಕ್ಷಕರಿಂದ, ಹಿರಿಯ ಕಲಾವಿದರಿಂದಲೇ ಕೇಳಬೇಕು. ನನ್ನ ಪೀಳಿಗೆಯವರಿಗೆ ದಾಸ ಭಾಗವತರ ಹಾಡುಗಾರಿಕೆ ಕೇಳಲು ಸಿಕ್ಕಿರುವ ಸಾಧ್ಯತೆಗಳು ಬಹಳ ಕಡಿಮೆ. 1992ರಲ್ಲಿ  ಮಂಗಳೂರಿನಲ್ಲಿ ನಡೆದ
“ಯಕ್ಷಧ್ವನಿ” ಎನ್ನುವ  ಶ್ರುತಿ ರಾಗ ಲಯ ತಾಳಗಳ ವಿಶಿಷ್ಟ ಕಾರ್ಯಕ್ರಮದಲ್ಲಿ ಇವರು ಹಾಡಿದ “ಶ್ರೀಕೃಷ್ಣ  ಪಾರಿಜಾತ” ಪ್ರಸಂಗದ ಹಾಡುಗಳ ವಿಡಿಯೋಗಳು ಈಗಲೂ ವಾಟ್ಸಾಪ್ ಮುಖಾಂತರ ಸುತ್ತು ಹೊಡೆಯುತ್ತವೆ.  ಕೃಷ್ಣ ಸತ್ಯಭಾಮೆಯರು  ಸುರಲೋಕಕ್ಕೆ ಹೋದಾಗ ಅಲ್ಲೆಲ್ಲ  ತುಂಬಿರುವ ಪರಿಮಳದ ಬಗ್ಗೆ ಸತ್ಯಭಾಮೆಗೆ ಮೂಡುವ ಕುತೂಹಲ, ಕೃಷ್ಣನು ಉತ್ತರಿಸುವ ಸಂದರ್ಭದ ಹಾಡುಗಳು ಅವು.  ದಾಸ ಭಾಗವತರ ಸ್ವರ ಮಾಧುರ್ಯ ಶಿಥಿಲಗೊಂಡಿದ್ದರೂ  ಅಂದಿನ  ಕಾರ್ಯಕ್ರಮದಲ್ಲಿ  ಹಾಡಿದ ಎಲ್ಲ ಹಾಡುಗಳೂ ಅವರ ಕಲಾ ಔನ್ನತ್ಯದ ಕಾಲವನ್ನು  ನೆನಪಿಸಿತ್ತು. “ವರಮನೋಹರೆ ಕೇಳು ಪಾರಿಜಾತವಿದು” ಎನ್ನುವ ಪದ್ಯ ಹಾಡುವಾಗ ಪುರಾಣ ಪ್ರಪಂಚಕ್ಕೆ ಎಳೆದೊಯ್ದು  ಶರಧಿ ಮಥನದಲ್ಲಿ
ಹುಟ್ಟಿದ ಅತ್ಯಂತ ಅಪೂರ್ವವಾದ  ಪಾರಿಜಾತ ವೃಕ್ಪದೆದುರು ನಮ್ಮನ್ನೂ ನಿಲ್ಲಿಸುವ ಪ್ರಯತ್ನ ನಡೆಯುತ್ತದೆ. ತೆಂಕು ಬಡಗು ತಿಟ್ಟುಗಳ ಹಿರಿಯ ಕಿರಿಯ ಭಾಗವತರ ಹಾಡುಗಾರಿಕೆಯ ಸಮ್ಮಿಲನದ ಆ ಕಾರ್ಯಕ್ರಮ ಯಕ್ಷಗಾನ ಲೋಕದಲ್ಲಿ ಲಭ್ಯ ಇರುವ ಒಂದು ಅಮೂಲ್ಯ ಅಪೂರ್ವ ದಾಖಲೀಕರಣವೂ ಹೌದದು. ಅಂದಿನ ಕಾರ್ಯಕ್ರಮದಲ್ಲಿ ನರಸಿಂಹ ದಾಸರನ್ನು ಪರಿಚಯಿಸುವಾಗ  ಹಿರಿಯ ಅರ್ಥಧಾರಿಗಳೂ ವಿದ್ವಾಂಸರೂ ಆದ ಪ್ರಭಾಕರ ಜೋಶಿಯವರು, ಅವರನ್ನು ಯಕ್ಷಗಾನ ಕಂಡ “ಸರ್ವಶ್ರೇಷ್ಠ ಭಾಗವತರು ಎಂದು ತರ್ಕಿಸಬಹುದು” ಎಂದಿದ್ದರು
(arguably the greatest ). ದಾಸ ಭಾಗವತರು ರಂಗಸ್ಥಳದಲ್ಲಿ ಸಾಮ್ರಾಟರಾಗಿ ಮೆರೆಯುತ್ತಿದ್ದ ಕಾಲದಲ್ಲಿ ಅವರ ಭಾಗವತಿಕೆ ಕೇಳಲೆಂದೇ ಪಾರಿಜಾತ ಪ್ರಸಂಗವನ್ನು ಆಡಿಸುತ್ತಿದ್ದರು ಎಂದಿದ್ದರು. ಯಕ್ಷಗಾನದ ವಿಮರ್ಶಕರು ಪತ್ರಕರ್ತರು ಆದ ರಾಘವನ್ ನಂಬಿಯಾರ್ ಮತ್ತು ಹೆಸರಾಂತ ಹಿರಿಯ ಮದ್ದಲೆಗಾರ ಹಿರಿಯಡ್ಕ ಗೋಪಾಲರಾಯರು ಕೂಡ, ದಾಸಭಾಗವತರ ಲಯಗಾರಿಕೆಗೆ ಯಕ್ಷಗಾನ ಲೋಕದಲ್ಲಿ ಸಾಟಿಯೇ ಇರಲಿಲ್ಲ ಎಂದು ಬೇರೆ ಬೇರೆ ಸಂದರ್ಭಗಳಲ್ಲಿ ಹೇಳಿದ್ದಾರೆ ಬರೆದಿದ್ದಾರೆ .

ದಾಸ ಭಾಗವತರು ತಮ್ಮ ಭಗ್ನ  ಸ್ವರದಲ್ಲೂ ಅಂದಿನ ಕಾರ್ಯಕ್ರಮದಲ್ಲಿ ಹಾಡಿದ ಹಾಡುಗಳನ್ನು ನೇರವಾಗಿ ಕೇಳಿದ  ಪ್ರೇಕ್ಷಕರು ಈಗಲೂ ಆ ಕಾರ್ಯಕ್ರಮದ ರಸಘಳಿಗೆಗಳನ್ನು ಮೆಲುಕು ಹಾಕುತ್ತಾರೆ.  ಯೂಟ್ಯೂಬ್  ಮೂಲಕ ಮತ್ತೆ ಮತ್ತೆ ಅಂದಿನ ಕಾರ್ಯಕ್ರಮದ ಮರುವೀಕ್ಷಣೆ ಮಾಡುತ್ತಾರೆ. ಮಂಗಳೂರಿನಲ್ಲಿ “ಯಕ್ಷಧ್ವನಿ” ಕಾರ್ಯಕ್ರಮ ನಡೆದ ನಂತರ ಉಡುಪಿಯಲ್ಲಿ  ಹಳೆಯ ಹೊಸ ತಲೆಮಾರಿನ ಭಾಗವತರ ಕೂಟದಲ್ಲಿ ನಡೆದ ಗಾನ ವೈವಿಧ್ಯ ಕಾರ್ಯಕ್ರಮದಲ್ಲೂ ದಾಸಭಾಗವತರ   ಹಾಡುಗಾರಿಕೆ ಅತ್ಯಂತ ಪ್ರಶಂಸೆಯನ್ನು ಪಡೆದಿತ್ತು .
ಧ್ವನಿಮುದ್ರಣ ಕಂಡು ಅಂಗಡಿಯಲ್ಲಿ ಮಾರಾಟವಾದ ದಾಸ ಭಾಗವತರ ಏಕೈಕ ಅಥವಾ ಬೆರಳೆಣಿಕೆಯ ಆಡಿಯೋ ಕ್ಯಾಸೆಟ್ ಗಳಲ್ಲಿ  ಅದೂ ಒಂದು ಇರಬೇಕು. ಇನ್ನು ದಾಸ ಭಾಗವತರು ಆಕಾಶವಾಣಿಯಲ್ಲಿ ಅನೇಕ ಪ್ರಸಂಗಗಳನ್ನು ಹಾಡಿದ್ದರಾದರೂ  ಅವ್ಯಾವುವೂ  ಈ ಕಾಲದ
ಪ್ರೇಕ್ಷಕರನ್ನು ತಲುಪದಿದ್ದುದು ದಾಸಭಾಗವತರನ್ನು ಸುತ್ತುವರಿದಿದ್ದ ಹಲವು ದುರಂತಗಳಲ್ಲಿನ ಒಂದು ದುರಂತ ಮತ್ತೆ ಯಕ್ಷಗಾನ ಪ್ರೇಕ್ಷಕರ  ದೌರ್ಭಗ್ಯ.   ೯೦ರ ದಶಕದ ಆ ಎರಡು ದಾಖಲೀಕರಣಗಳ ಸಮಯದಲ್ಲಿ ತಮ್ಮ ಆಕರ್ಷಕವಾದ ಸ್ವರವನ್ನು ಕಳೆದುಕೊಂಡಿದ್ದರೂ, ದಾಸ ಭಾಗವತರ  ವರ್ಚಸ್ಸು ಲಯ ಹುಮ್ಮಸ್ಸು, ಸಿದ್ಧಿ, ಆತ್ಮ ವಿಶ್ವಾಸ  ಕುಂದಿರಲಿಲ್ಲ. ಅವರು  ಪ್ರತಿ ಹಾಡನ್ನು ನಿರ್ವಹಿಸಿದ ರೀತಿಯೂ ಯಕ್ಷಗಾನದ ಇತಿಹಾಸದಲ್ಲಿ ಎಲ್ಲೋ ಮರೆಯಾಗಿರುವ ಪುರಾತನ ಸುವರ್ಣ ಕಾಲವನ್ನು ನೆನಪಿಸುತ್ತಿತ್ತು.  ಹಾಡಿನ ನಡುವೆ, ಅತ್ಯಂತ ಸ್ಪಷ್ಟವಾಗಿ ಕೇಳಿಸುವ  ತಾಳದ ಪ್ರತಿ ಪೆಟ್ಟಿನ  ಸದ್ದು, ನಿಧಾನದಲ್ಲಿಯೂ ವೇಗದಲ್ಲಿಯೂ ನಿಖರವಾಗಿರುವ ತಾಳದ ಚಲನೆ, ಗತಿ ಅವರ ಲಯಗಾರಿಕೆಯ ಕಿರು ಝಲಕ್
ಒದಗಿಸುತ್ತಿದ್ದವು.  ಹಾಡುವಾಗ ಸುತ್ತಲಿನ ವಿದ್ಯಮಾನವನ್ನು ಕುತ್ತಿಗೆ ಕಣ್ಣುಗಳ ನಿಧಾನ  ಚಲನೆಯಲ್ಲಿ  ಗಮನಿಸುವ, ಯಾರಿಗೂ ಯಾವುದಕ್ಕೂ ಅಂಜದ ಅಳುಕದ ಆತ್ಮವಿಶ್ವಾಸ ಹೊತ್ತು  ಇಲ್ಲಿ ನಾನೇ  ಸೂತ್ರಧಾರ ಎನ್ನುವ ನಿಲುವಿನಲ್ಲಿ  ಅವರು ಭಾಗವತಿಕೆ ನಡೆಸುತ್ತಿದ್ದ ರೀತಿ  ಕಣ್ಣಿಗೆ ಕಟ್ಟುತ್ತಿತ್ತು. ಪದ್ಯ ಸಾಹಿತ್ಯದ ಸ್ಪಷ್ಟತೆಯ ಬಗ್ಗೆ ಶಬ್ದಗಳ ರೂಪದ ಕುರಿತು ಅವರಿಗಿದ್ದ ಎಚ್ಚರ ಕಾಳಜಿ ಆ ಪ್ರಸ್ತುತಿಗಳಲ್ಲೂ ಕಾಣಿಸುತ್ತಿತ್ತು.

 ಒಮ್ಮೆ ಮೇರು ಕಲಾವಿದ, ಕುಣಿತದ ಗುರು ವೀರಭಧ್ರನಾಯ್ಕರಿಗೂ ಅವರನ್ನು ಕುಣಿಸುವ ದಾಸಭಾಗವತರಿಗೂ ಸ್ಪರ್ಧೆ ಬಿದ್ದಿದ್ದಂತೆ. ಅಂದಿನ ಯಕ್ಷಗಾನದಲ್ಲಿ ದಾಸ ಭಾಗವತರು ಮತ್ತು ಮದ್ದಲೆಗಾರ ತಿಮ್ಮಪ್ಪ ನಾಯ್ಕರು ಸೇರಿ ವೀರಭಧ್ರನಾಯ್ಕರ ಕುಣಿತದ ತಾಳ
ತಪ್ಪಿಸುತ್ತೆವೆಂದು ಪಂಥ ಹಾಕಿಕೊಂಡಿದ್ದರಂತೆ. ಭಾಗವತ ಮತ್ತು ಮದ್ದಲೆಗಾರರ ಸಾಮರ್ಥ್ಯ ಮತ್ತು  ನಾಜೂಕಿನ ಹೊಂದಾಣಿಕೆಯಲ್ಲಿ ಅಂದು ವೀರಭಧ್ರನಾಯ್ಕರು ತಾಳ ತಪ್ಪಿದರಂತೆ. ಅನಿರೀಕ್ಷಿತ ಮುಖಭಂಗದಿಂದ ಬೇಸರಗೊಂಡ ವೀರಭಧ್ರ ನಾಯ್ಕರು ದಾಸಭಾಗವತರಲ್ಲಿ ಮಾತು ಬಿಟ್ಟರಂತೆ. ಕೆಲವು ಸಮಯದ ನಂತರ ಮಾರಣಕಟ್ಟೆ ದೇವಸ್ಥಾನದ ಮೊಕ್ತೇಸರರ ಸಮಕ್ಷಮದಲ್ಲಿ ಮೇರು ಕಲಾವಿದರ ನಡುವೆ ರಾಜಿ ಆಯಿತಂತೆ. ಇನ್ನು ನಮ್ಮ ಕಾಲದ ಶ್ರೇಷ್ಠ ಭಾಗವತರಲ್ಲೊಬ್ಬರಾಗಿದ್ದ ಕಡತೋಕ ಮಂಜುನಾಥ ಭಾಗವತರಿಗೆ ದಾಸಭಾಗವತರು
ಪ್ರೇರಣೆ ಆಗಿದ್ದವರು. ಇಡುಗುಂಜಿ ಮೇಳದಲ್ಲಿ ಕೆರೆಮನೆಯ ನಾಲ್ಕು ತಲೆಮಾರುಗಳನ್ನು ಕುಣಿಸಿದ, ಇನ್ನೋರ್ವ ಅತ್ಯುತ್ತಮ  ಭಾಗವತ  ನೆಬ್ಬೂರು ನಾರಾಯಣ ಭಾಗವತರನ್ನು ಸಂದಶನವೊಂದರಲ್ಲಿ ನಿಮ್ಮ ನೆಚ್ಚಿನ ಭಾಗವತರು ಯಾರು ಎಂದು ಕೇಳಿದಾಗ, ಅವರು ಮೊದಲು
ಹೇಳಿದ್ದ  ಹೆಸರು ದಾಸಭಾಗವತರದು .ದಾಸ ಭಾಗವತರ ಭಾಗವತಿಕೆಯ ತಾಳಮದ್ದಲೆಯೊಂದರಲ್ಲಿ ಪ್ರಸಿದ್ಧ ಅರ್ಥದಾರಿಯಾಗಿದ್ದ ಶೇಣಿ ಗೋಪಾಲಕೃಷ್ಣ ಭಟ್ಟರು ತಮ್ಮ ಒಂದು ಪದ್ಯಕ್ಕೆ ಸರಿಯಾದ ಅರ್ಥ ಹೇಳಲಿಲ್ಲ ಎನ್ನುವ ಕಾರಣಕ್ಕೆ, ಮುಂದಿನ ಪದವನ್ನು ಹಾಡದೇ, ಶೇಣಿಯವರಿಗೆ “ಈಗ ನನ್ನ ಪದಕ್ಕೊಂದು ಅರ್ಥ ಹೇಳಿ” ಎಂದು ಸೂಚಿಸಿದ ಘಟನೆಯನ್ನು ಹಿರಿಯ ಭಾಗವತ ಸುಬ್ರಹ್ಮಣ್ಯ ಧಾರೇಶ್ವರರು ಒಮ್ಮೆ ನೆನಪು ಮಾಡಿಕೊಂಡಿದ್ದರು. ಅಪ್ರತಿಮ ಪ್ರತಿಭೆ, ಕಲಾ ಸಂಪನ್ನತೆ, ಸಿದ್ಧಿಯ ಔನ್ನತ್ಯ ಎಲ್ಲವೂ ಮೇಳೈಸಿದ ಪ್ರಸಂಗವನ್ನು ಬಿಗಿ ಕಳೆದುಕೊಳ್ಳದಂತೆ ಪ್ರಸ್ತುತ ಪಡಿಸುವ, ರಂಗದಲ್ಲಿ ಭಾಗವತನಾಗಿರುವ ತಾನೇ ನಿರ್ದೇಶಕ ಎಂದು ಆತ್ಮವಿಶ್ವಾಸದಲ್ಲಿ  ಸಾರಿಹೇಳುವ ಹಲವು ಘಟನೆಗಳು ಹುಡುಕುತ್ತ ಹೋದರೆ ಕಣ್ಣು ಮುಂದೆ ಬರುತ್ತವೆ. ದಾಸ ಭಾಗವತರ ನೇರ ಅನುಭವ ಭಾಗ್ಯ ಈ ಕಾಲದ ಯಕ್ಷಗಾನ ಆಸಕ್ತರಿಗೆ  ಇಲ್ಲದಿದ್ದರೂ, ಅವರನ್ನು ಗೌರವಿಸುತ್ತಿದ್ದ ಅವರ ಸಿದ್ಧಿ ಪ್ರಸಿದ್ಧಿಗಳನ್ನು ಹತ್ತಿರದಿಂದ ಕಂಡು ಆಕರ್ಷಿತರಾಗಿದ್ದ ಪ್ರಭಾವಿಸಲ್ಪಟ್ಟಿದ್ದ ಕೆಲವು ಹಿರಿಯ ಕಲಾವಿದರು, ಪ್ರೇಕ್ಷಕರ ಮೂಲಕವಷ್ಟೇ ದಾಸ ಭಾಗವತರು  ಸದ್ಯಕ್ಕೆ ಸಿಗುತ್ತಾರೆ. ಇಲ್ಲದಿದ್ದರೆ, ವೃದ್ಧಾಪ್ಯದ ಸಮಯದಲ್ಲಿ ದಾಖಲೀಕರಣಗೊಂಡ ಕೆಲವು ಹಾಡುಗಳ ಮೂಲಕ, ವೈಭವದಲ್ಲಿ ಹಿಂದೆಂದೋ ನಳನಳಿಸುತ್ತಿದ್ದ ಅರಮನೆಯೊಂದು ಅಕಸ್ಮಾತ್ ಕುಸಿದುಬಿದ್ದು ಅವಶೇಷವಾಗಿರುವುದನ್ನು ನೆನಪಿಸುತ್ತಾರೆ.

ತನ್ನ ಪ್ರತಿಭೆ, ವರ್ಚಸ್ಸುಗಳಿಂದ ಚಿರಸ್ಮರಣೀಯ ಪ್ರದರ್ಶನಗಳನ್ನು ನೀಡುತ್ತಾ ಜನರಿಗೆ ಕಥೆ ಪಾತ್ರಗಳನ್ನು ಸಾಕ್ಷಾತ್ಕರಿಸುತ್ತಿದ್ದ ದಾಸ ಭಾಗವತರು ರಂಗದ ಮೇಲೆ ಸಾಮ್ರಾಟರಾಗಿದ್ದವರು. ದಂತಕತೆಯಾಗಿ ಯಕ್ಷಗಾನದ ಸೀಮೆಯಲ್ಲಿ ಹಬ್ಬಿಹರಡಿದವರು. ಇಂದಿಗೆ
60-70ವರ್ಷಗಳ ಹಿಂದೆ ಅಪಾರ ಜನಾಕರ್ಷಣೆ, ಮೇರು ತಾರಾಮೌಲ್ಯವನ್ನು ಪಡೆದಿದ್ದವರು. ಆದರೆ ರಂಗಸ್ಥಳದಿಂದ ಕೆಳಗೆ,ಚೌಕಿಯ ಹೊರಗೆ  ಬದುಕಿನ ಬಹುತೇಕ ಕಾಲವನ್ನು ಹುಲ್ಲಿನ ಸೋರುವ ಮಾಡು ಮುರುಕು ಮನೆಯಲ್ಲಿ ತೀವ್ರ ಬಡತನದಲ್ಲಿ ಕಳೆದವರು. ಬದುಕಿನ ಕೊನೆಯ
ಕಾಲದಲ್ಲಿ ಗ್ರಾಮಸ್ಥರು ಹಣ ಸಂಗ್ರಹಿಸಿ ಮತ್ತೆ ಸರಕಾರದಿಂದ ಸಹಾಯ ಪಡೆದು ಅವರಿಗೊಂದು ಮನೆ ಕಟ್ಟಿಸಿಕೊಟ್ಟರು. ರಂಗದ ಮೇಲೆ ಚಕ್ರವರ್ತಿಗಳಂತೆ ಮೆರೆಯುವ ಅಪ್ರತಿಮ ಪ್ರತಿಭಾನ್ವಿತರ ಬಣ್ಣದ ಹೊರಗಿನ ಬದುಕಿನಲ್ಲಿ ದಾರಿದ್ಯ್ರ ದುರಂತಗಳೇ ತುಂಬಿರುವ
ಉದಾಹರಣೆಗಳಲ್ಲಿ ದಾಸಭಾಗವತರೂ ಒಬ್ಬರು. ಏರು ತಗ್ಗಿನ ಬದುಕಿನ ನಡುವೆಯೇ ಕಲೆಯ ಒಟ್ಟಿಗೆ ಸಂಬಂಧವನ್ನು ಬದುಕಿದಷ್ಟು ಕಾಲ ಮುಂದುವರಿಸಿದರು. ಹೊಳೆಯುವ ಬೆಳಕಿನ ರಂಗಸ್ಥಳದ ವೈಭವದದಲ್ಲಿ, ಗುಂಗು ಹತ್ತಿಸಿಕೊಂಡು ಅವರನ್ನೇ ಹುಡುಕಿಕೊಂಡು ಬರುತ್ತಿದ್ದ
ಪ್ರೇಕ್ಷಕರ ಕರತಾಡನದ ನಡುವೆ, ಅಲ್ಲದಿದ್ದರೆ ನವರಾತ್ರಿಯ ಹೂವಿನಕೋಲು ತಿರುಗಾಟದಲ್ಲಿ. ದಾಸ ಭಾಗವತರಿಗೆ ಕಂಠಪಾಠವಾಗಿದ್ದ, ಅವರು ಇಷ್ಟಪಟ್ಟು ಆಡಿಸುತ್ತಿದ್ದ, ಪ್ರೇಕ್ಷಕರು ಅವರ ಭಾಗವತಿಕೆಗೋಸ್ಕರ ಮುಗಿಬಿದ್ದು  ನೋಡಬಯಸುತ್ತಿದ್ದ  ಅನೇಕ ಪ್ರಸಂಗಗಳು ಈಗಲೂ
ಬೇರೆಬೇರೆ ರಂಗಸ್ಥಳಗಳಲ್ಲಿ ಆಡಲ್ಪಡುತ್ತವೆ. ಚಂದ್ರಾವಳಿ ವಿಲಾಸ, ಪಾರಿಜಾತ ಪ್ರಸಂಗದ ಹಾಡುಗಳೂ ಕೇಳಿಸುತ್ತವೆ. ಮತ್ತೆ ನವರಾತ್ರಿಯೂ  ಈ ವರ್ಷ ಇನ್ನೇನು ಬರುವ ತಯಾರಿಯಲ್ಲಿದೆ; ಆದರೆ ದಾಸಭಾಗವತರು ಮರಳಿ ಬರಲಾರು, ಮುನಿಸಿಕೊಂಡು ಎಂದೋ ಬಿಟ್ಟು ಹೋದ ಅವರ ಸ್ವರದಂತೆ.

ದಾಸ ಭಾಗವತರ ಕೊನೆಯ ಕಾಲದ ಒಂದು ವಿಡಿಯೋ:

ಹೂವಿನ ಕೋಲು ಪ್ರಕಾರ:

ಕತೆಯಾಯಿತು  ಮರ

  • ಯೋಗೀಂದ್ರ ಮರವಂತೆ

ನೂರ್ಕಾಲ ಬದುಕಿದರೆ ಮಾನವರಿಗೊಂದು ವಿಶೇಷ ಸಾಧನೆ. ಕೇವಲ ಆಯಸ್ಸು ವಿಶೇಷತೆಯ ಮಾನದಂಡವಾಗದು. ಸ್ಥಳದ ನಾವಿನ್ಯತೆ, ಜನಪ್ರಿಯತೆ ಅಲ್ಲಿನ ವೈಶಿಷ್ಟ್ಯವನ್ನು ಅವಲಂಬಿಸಿರುತ್ತದೆ. ಇಂಗ್ಲೆಂಡ್, ಸ್ಕಾಟ್ಲೆಂಡಿನ ಗಡಿಯುದ್ದಕ್ಕೂ ರೋಮನ್ನರು ಕಟ್ಟಿದ ಹೆಡ್ರಿಯನ್ ಗೋಡೆ (ಪಾಗಾರ) ಐತಿಹಾಸಿಕ ಕುರುಹು. ಆ ಪಾಗಾರ ಮುರಿದು ಬಿದ್ದ, ಎರಡು ಗುಡ್ಡಗಳ ನಡುವೇ ಬಳುಕುವ ಸೊಂಟದಂದದ ಜಾಗೆಯಲ್ಲಿ ಸುಮಾರು ನೂರೈವತ್ತು ವರ್ಷಗಳಿಂದ ಸ್ವತಂತ್ರವಾಗಿ ಹರಡಿ ಸೊಂಪಾಗಿ ಬೆಳೆದಿದ್ದ ಚೆಲುವೆ ಸಿಕಮೋರ್ ಗ್ಯಾಪ್ ಮರ. ಸಿಕಮೋರ್ ಮರಗಳು ಸರಿ ಸುಮಾರು ೩ ೦ ೦ -೪ ೦ ೦ ವರ್ಷಗಳ ಕಾಲ ಬಾಳ ಬಲ್ಲವು. ಮರಗಳ ಜಗತ್ತಿನಲ್ಲಿ ೩ ಶತಮಾನಗಳ ಬಾಳ್ವೆ ಏನೇನೂ ಅಲ್ಲ. ಸಹಸ್ರಾರು ವರ್ಷಗಳ ಕಾಲ ಬದುಕಿ ಮನುಕುಲದ ಉನ್ನತಿ ಅವನತಿಯ ಹಾದಿಯನ್ನೆಲ್ಲ ಅವಲೋಕಿಸುವ ಮರಗಳು ಜಗತ್ತಿನ ತುಂಬೆಲ್ಲ ಕಾಣ ಸಿಗುತ್ತವೆ. ಇಂದಿನ ಲೇಖನ ನೀವು ಊಹಿಸಿದಂತೆ ನಾರ್ಥಂಬಲ್ಯಾನ್ಡ್ ನ ಪ್ರಸಿದ್ಧ ಸಿಕಮೋರ್ ಗ್ಯಾಪ್ ಮರದ ಕಥೆ. ಯೋಗೀಂದ್ರ ಅವರ ಬರಹದಲ್ಲಿ ಹಿಂದೆ ನಾವು ಕಂಡಂತೆ ಅಮೂರ್ತವನ್ನು ಮೂರ್ತವಾಗಿಸುವ, ನಿರ್ಜಿವವನ್ನು ಸಜೀವಗೊಳಿಸುವ ವೈಶಿಷ್ಟ್ಯತೆ ಇದೆ. ಅದೇ ಹೊಳಹಿನಲ್ಲಿ ಮರವನ್ನು ಅವರು ಮಾನವ ರೂಪದಲ್ಲಿ ನಮ್ಮ ಮುಂದೆ ಪ್ರಸ್ತುತಿಸಿದ್ದಾರೆ. ಈ ಲೇಖನವನ್ನು ಓದುವಾಗ ಕರುಣೆ, ಜಿಗುಪ್ಸೆ, ಕ್ರೌರ್ಯ, ಮತ್ಸರ, ಕುಹಕತೆ, ಇನ್ನಿತರ ಭಾವಗಳು ನಿಮ್ಮಲ್ಲಿ ಹೊಮ್ಮುವುದು ಖಚಿತ. ಕೊನೆಯಲ್ಲಿ ಮಾನವನ ಕ್ರೌರ್ಯಕ್ಕೆ ಸರಿ ಸಮನಾಗಿ ಪ್ರಕೃತಿ ಹಾಗೂ ಮಾನವನ ಧನ್ವಂತರಿ ಸ್ಪರ್ಶದ ಪರಿಣಾಮವನ್ನೂ ಕಾಣಬಹುದು.

-ಸಂಪಾದಕ

ಸಿಕಾಮೋರ್ ಗ್ಯಾಪ್ ಮರ ತನ್ನ ಉಚ್ಛ್ಛ್ರಾವಸ್ಥೆಯಲ್ಲಿ (ಚಿತ್ರ ಕೃಪೆ : ಅಂತರ್ಜಾಲ)

ಈಗಷ್ಟೇ ಕಳೆದ,  ಮೇ ತಿಂಗಳ ಒಂಬತ್ತನೆಯ ತಾರೀಕಿನಂದು  ಜಗತ್ತಿನ ಯಾವ ಯಾವ ನ್ಯಾಯಾಲಯದಲ್ಲಿ ಎಷ್ಟೆಷ್ಟು  ವಾದ ಪ್ರತಿವಾದ ನಡೆಯಿತೋ  ಗೊತ್ತಿಲ್ಲ, ಯಾರು ಕೊಲೆಗಾರ ಅಲ್ಲದಿದ್ದರೆ  ವಂಚಕ ಎಂದು ಸಾಬೀತಾಯಿತೋ ತಿಳಿದಿಲ್ಲ . ಎಷ್ಟು ಆಪಾದಿತರಿಗೆ ಶಿಕ್ಷೆಯ  ಘೋಷಣೆ , ಇನ್ನೆಷ್ಟು ನಿರಪರಾಧಿಗಳ ಖುಲಾಸೆ ಎಂದು ಹೇಳುವುದು ಅಸಾಧ್ಯ.
ಆದರೆ ಇಂಗ್ಲೆಂಡ್ ನ ಉತ್ತರ ಗಡಿಯ ನ್ಯೂ ಕಾಸಲ್ ಕ್ರೌನ್  ಕೋರ್ಟಿನ  ನ್ಯಾಯಾಧೀಶರು ಆ ದಿನದ  ಅತ್ಯಂತ ವಿಶಿಷ್ಟ ತೀರ್ಪೊಂದನ್ನು ನೀಡಿದ್ದರು. ಆ ತೀರ್ಪು , ಆ ದಿನದ ಮಾತ್ರವಲ್ಲ ,  ಇಡೀ ವರ್ಷದ, ದಶಕದ, ಶತಮಾನದ,  ಅಲ್ಲದಿದ್ದರೆ ಯಾವ ನ್ಯಾಯ ವ್ಯವಸ್ಥೆಯೂ ಎಂದೂ ಉಚ್ಛರಿಸಿರಲಾರದ  ಅಪೂರ್ವ ತೀರ್ಪೂ  ಆಗಿದ್ದಿರಬೇಕು. ಅಂದು ಕಟಕಟೆಯಲ್ಲಿ ನಿಂತಿದ್ದ ಇಂಗ್ಲೆಂಡ್ ನ ಉತ್ತರ-ಪಶ್ಚಿಮ (ವಾಯುವ್ಯ) ಪ್ರಾಂತ್ಯದ ಇಬ್ಬರು ಸಾಮಾನ್ಯ ವ್ಯಕ್ತಿಗಳ ಕಿಡಿಗೇಡಿತನ ಸಾಬೀತಾಗಿತ್ತು.  ಅವರೇ  ಅಪರಾಧಿಗಳು ಎಂದು ತೀರ್ಪು ಹೊರಬಿದ್ದಿತ್ತು ,  ಅಪರಾಧಕ್ಕೆ ತಕ್ಕುದಾದ ಶಿಕ್ಷೆ ಮುಂದಿನ ತಿಂಗಳು ಜುಲೈಯಲ್ಲಿ ನಿರ್ಧಾರವಾಗಲಿದೆ  ಎಂದೂ ತಿಳಿಸಲಾಗಿತ್ತು.

ಆರೋಪಿಗಳಿಗೆ ಶಿಕ್ಷೆ ಆಗುವುದೇನೂ ಹೊಸತಲ್ಲ ಬಿಡಿ.  ಅಂದು ಆರೋಪಿಯಿಂದ ಅಪರಾಧಿಗಳಾಗಿ ಬದಲಾದವರು ವಾಯುವ್ಯ ಇಂಗ್ಲೆಂಡ್ ನ ಕಂಬ್ರಿಯ  ಅಥವಾ ಅದೇ ಪ್ರಾಂತ್ಯದ ವಿಶ್ವವಿಖ್ಯಾತ ಹೆಸರಾದ  ಲೇಕ್ ಡಿಸ್ಟ್ರಿಕ್ಟ್ ಪ್ರದೇಶದ  ವಾಸಿಗಳು . ಅವರೊಂದು   ಕುಚೋದ್ಯವನ್ನು ಮಾಡಿದ್ದರು. ಸುಮಾರು ಎರಡು ವರ್ಷಗಳ ಹಿಂದಿನ ನಡುರಾತ್ರಿಗೆ, ತುಸು ದೂರ  ಕಾರು ಓಡಿಸಿಕೊಂಡು ಹೋಗಿ  ಆಮೇಲೆ ಇಪ್ಪತ್ತು ನಿಮಿಷ ನಡೆದು  ಗರಗಸ ಹಿಡಿದು ನಾರ್ಥಂಬರಲ್ಯಾಂಡ್ ಎನ್ನುವ ಪ್ರದೇಶಕ್ಕೆ ಬಂದಿದ್ದರು. ಜೋರು ಗಾಳಿ ಬೀಸುವ ತಣ್ಣಗಿನ ಹವೆಯ ಆ ರಾತ್ರಿ  ಅಲ್ಲಿದ್ದ ಒಂದು ಪುರಾತನ ವೃಕ್ಷವನ್ನು ವಿನಾಕಾರಣ ಕಡಿದಿದ್ದರು. ಸಕಾರಣವಾಗಿಯಾದರೂ ಒಂದು ಮರವನ್ನು ಕಡಿಯಬಹುದೇ ಎನ್ನುವುದೇ ಒಂದು ದೊಡ್ಡ ಜಿಜ್ಞಾಸೆ. ಮರಗಳಿಗೆ ವಿವೇಚನೆ ಇದ್ದರೆ , ಅದಕ್ಕೆ ತಕ್ಕುದಾಗಿ ಮಾತೂ  ಬಂದಿದ್ದರೆ ಅವುಗಳ ಅಭಿಪ್ರಾಯ  ಏನಿರುತ್ತಿತ್ತೋ? ಒಬ್ಬ ವ್ಯಕ್ತಿಯನ್ನು ಕೊಲ್ಲಬಹುದೇ  ಎನ್ನುವ ಪ್ರಶ್ನೆಗೆ ಮನುಷ್ಯರು ನೀಡಬಹುದಾದ  ಉತ್ತರಕ್ಕಿಂತ ಮರಗಳು  ನೀಡುವ ಉತ್ತರ ಬಹಳ ಭಿನ್ನ ಇರಲಿಕ್ಕಿಲ್ಲ. ಹಾಗಂತ  ಭೂಮಿ ಆಕಾಶಗಳ ಪ್ರತಿ ಅಂಗುಲಕ್ಕೂ  ಅನಭಿಷಕ್ತ ದೊರೆಯಂತೆ ವರ್ತಿಸುವ ಮನುಷ್ಯರಿಗೆ ಮರಗಳನ್ನು ಕಡಿಯಬಹುದೇ ಎನ್ನುವ ಪ್ರಶ್ನೆಯೇ  ಅಪ್ರಸ್ತುತ ವಿಲಕ್ಷಣ ವಿನೋದವಾಗಿ ಕಂಡೀತು.

ಇರಲಿ, ಅಂತೂ ಆ ಇಬ್ಬರು ಜೊತೆಯಾಗಿ ಎಲ್ಲ ಅರ್ಥ ಜಿಜ್ಞಾಸೆಗಳನ್ನು ಮೀರಿ ಮರವೊಂದನ್ನು ಕಡಿದಿದ್ದರು. ಹಾಗೆ ತಾವು ಕಡಿದು ಒರಗಿಸಿದ ಮರದ ದಿಮ್ಮಿ ,ತೊಗಟೆ, ಎಲೆ, ಟೊಂಗೆ, ಟಿಸಿಲು, ಬೇರು ನಾರು ಯಾವುದೂ ಆ ಮರಕಟುಕರಿಗೆ ಬೇಕಿರಲಿಲ್ಲ. ಕಟ್ಟಿಗೆಗಾಗಿ ಮಾರಿ ಹಣ ಮಾಡುವ ಉದ್ದೇಶವೂ  ಅವರದಾಗಿರಲಿಲ್ಲ. ಯಾರೋ ನೆಟ್ಟ, ಯಾರದೋ ಇಚ್ಛೆಯಿಂದಾಗಿ ಆ ಸ್ಥಳದಲ್ಲಿ ಬೆಳೆದ, ನಿತ್ಯ ಜೀವನ್ಮುಖಿ  ಪ್ರಕೃತಿಗೆ ಆ ಪ್ರದೇಶದಲ್ಲೊಂದು ಹೊಸ ಆಯಾಮ ನೀಡಿದ, ಭೂಮಿ ಬಾನು ,ನಾಡು ಕಾಡು, ಹುಲ್ಲು ಹಸಿರು, ಕಲ್ಲು ಮಣ್ಣುಗಳು ಒಂದಾಗಿ ನಲಿಯುವ, ಬೆಟ್ಟ ಕಣಿವೆಗಳು ಒಂದಾಗಿ ಕುಣಿಯುವ  ಜಾಗದಲ್ಲಿ  ಬಲಿತ, ಯಾರಿಗೆ ಯಾವ ತೊಂದರೆಯನ್ನೂ ಕೊಡದ, ಸಾಧ್ಯ ಆದರೆ ತಂಪು ನೆರಳು ಶುದ್ಧ ಗಾಳಿ ಮತ್ತೆ ನಯನ ಮನೋಹರ ದೃಶ್ಯವನ್ನು ಸಹಜವಾಗಿ ಬಿಡಿಸುತ್ತ  ಅಸಂಖ್ಯ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತ ಪ್ರಸಿದ್ಧವಾಗಿದ್ದ ಮರವೊಂದು  ಅಚಾನಕ್ ಇಲ್ಲದಿದ್ದರೆ ಜಗತ್ತು ಹೇಗೆ ಪ್ರತಿಕ್ರಿಯಿಸಬಹುದು  ಎಂದು ಆ ಇಬ್ಬರಿಗೆ ನೋಡಬೇಕಿತ್ತು. ಅಷ್ಟೇ. ಬರೇ ಅಷ್ಟೇ. ಒಂದು ಮರವನ್ನು ಕಡಿಯಲು ಅವರಿಗಿದ್ದದ್ದು ಅದೊಂದೇ  ಕ್ಷುಲ್ಲಕ ಕಾರಣ-ಪ್ರೇರಣೆ. ಕಾಲ, ಭೂಮಿ, ಜೀವಿ, ಜೀವನ  ಸಂದರ್ಭ ಎಲ್ಲವನ್ನು  ಒಂದು ಕ್ಷಣಕ್ಕಾದರೂ ಅಪಹಾಸ್ಯ ಮಾಡಲು ಅವರು ಕಂಡುಕೊಂಡ ದಾರಿ, ಪುರಾತನ ಚಾರಿತ್ರಿಕ ಸಿಕಮೋರ್ ಮರವನ್ನು ಕಡಿಯುವುದು. ಮತ್ತೆ  ಆ ಮರದ ಬಗ್ಗೆ ಕೇಳಿದವರ, ನೋಡಿದವರ, ಫೋಟೋ ತೆಗೆದವರ, ನೆರಳಲ್ಲಿ ಒಂದು ಘಳಿಗೆ ಕುಳಿತವರ, ತಮ್ಮ ಮೃತ ಆಪ್ತರ ಬೂದಿಯನ್ನು ಮರದ ಆಸುಪಾಸಲ್ಲಿ ಚೆಲ್ಲಿ ಆರ್ದ್ರರಾದವರ ಅಸಹಾಯಕತನ ಸಂಕಟವನನ್ನು ನೆನೆದು ಖುಷಿ ಪಡುವುದಿತ್ತು.  ಒಟ್ಟಾರೆ ಆ  ಮರಕಟುಕರಿಂದ ,
ಸುಮಾರು ೧೫೦ ವರ್ಷಗಳ ಹಿಂದೆ ನೆಡಲ್ಪಟ್ಟ ಸಸಿ ಮರ ಹೆಮ್ಮರವಾಗಿ ಬೆಳೆದು ಜಗತ್ತಿನ ಮೂಲೆಮೂಲೆಯ  ಪ್ರವಾಸಿಗಳಿಗೆ ಪರಿಸರ ಪ್ರೇಮಿಗಳಿಗೆ, ಸಿನೆಮಾ ನಿರ್ದೇಶಕರಿಗೆ, ಇವರ್ಯಾರೂ ಅಲ್ಲದ ಜನಸಾಮಾನ್ಯರಿಗೆ,  ಅಷ್ಟೇ ಏಕೆ ಇಡೀ ಈಶಾನ್ಯ ಇಂಗ್ಲೆಂಡಿಗೆ
ಹೆಗ್ಗುರುತೇ  ಆಗಿದ್ದ “ಸಿಕಮೋರ ಗ್ಯಾಪ್ ಮರ ” ಅಂದು ಕಡಿಯಲ್ಪಟ್ಟು ನೆಲದ ಮೇಲೆ ಧೊಫ್ ಎಂದು ಬಿದ್ದಿತ್ತು. ಕಡಿಯಲ್ಪಟ್ಟ ನಡುರಾತ್ರಿಯಿಂದ ಬೆಳಗಿನ ತನಕವೂ ಆ ಮರವನ್ನು ತಿಳಿದವರು ಎಲ್ಲೆಲ್ಲಿ ಹೇಗೇಗೆ ಇದ್ದರೂ ಅವರಿಗೆಲ್ಲ ತಮ್ಮ ಜಗತ್ತು ಏನೂ ಬದಲಾಗದೆ ನಿನ್ನೆಯಂತೆಯೇ ಇದೆ ಎನ್ನುವ ಭ್ರಮೆಯೇ  ಮುಂದುವರಿದಿತ್ತು.  ಹಾಗಂತ ಬೆಳಗಾಗುತ್ತಲೇ, ಒಂದು ಕೆಟ್ಟ ಹಾಸ್ಯಕ್ಕಾಗಿ ಮಾಡಿದ ಕೃತ್ಯ ನೂರೈವತ್ತು  ವರ್ಷಗಳ ಇತಿಹಾಸದ ಹಾದಿ ಬದಲಿಸಿತ್ತು. ೨೦೨೩ರ ಸೆಪ್ಟೆಂಬರ್ ೨೮ ರ ಬೆಳಿಗ್ಗೆ ಆ ಮರವನ್ನು ನೋಡಿ, ಕೇಳಿ, ತಿಳಿದಿದ್ದ ಎಲ್ಲರಿಗೂ ಆಘಾತ, ದುಗುಡ, ಹತಾಶೆ ಕಾದಿತ್ತು.

ನಿತ್ಯವೂ ಜಗತ್ತಿನ ಮೂಲೆಮೂಲೆಗಳಲ್ಲಿ  ಮರಗಳು ಉರುಳುವುದು, ಗಿಡಗಳನ್ನು ಸವರುವುದು, ಕಟ್ಟಡವನ್ನು ಎಬ್ಬಿಸುವುದು, ರಸ್ತೆಯನ್ನು ಹಾಸುವುದು ಅಭಿವೃದ್ಧಿಯ ಸಂಕೇತವಾಗಿರುವಾಗ ಈಶಾನ್ಯ ಇಂಗ್ಲೆಂಡಿನ ಸಣ್ಣ ಊರಿನ ಹಳೆಯ ಮರವನ್ನು ಉರುಳಿಸಿದವರು ಯಾಕೆ
ಬಂಧನಕ್ಕೊಳಗಾದರು?  ಬಂಧಿಸಲ್ಪಟ್ಟವರನ್ನು ನ್ಯಾಯಾಲಯ ಏಕೆ  ಅಪರಾಧಿ ಎಂದು ತೀರ್ಮಾನಿಸಿತು? ಮನುಷ್ಯರಿಗೆ ಹೀಗೊಂದು ಪ್ರಶ್ನೆ ಬರುವ ಸಾಧ್ಯತೆ ಇದೆಯೋ ಇಲ್ಲವೋ ಗೊತ್ತಿಲ್ಲ ನಿತ್ಯವೂ ಕಡಿಯಲ್ಪಡುವ ಅಷ್ಟೇನೂ ಪ್ರಸಿದ್ಧವಲ್ಲದ ಅತಿ ಸಾಮಾನ್ಯ ಮರಗಳ
ಸಂತತಿಗಾದರೂ ಹೀಗೊಂದು ಸಂದೇಹ ಕಾಡೀತು.

ಹತ್ತೊಂಬತ್ತನೆಯ ಶತಮಾನದ ಉತ್ತರಾರ್ಧದಲ್ಲಿ , ಇಂತಹದ್ದೆಂದು ದಾಖಲಾಗದ ದಿನದಂದು ವಕೀಲ, ಅನ್ವೇಷಕ ಮತ್ತೆ ಸದ್ರಿ ಸ್ಥಳದ ಅಂದಿನ ಮಾಲೀಕ ಜಾನ್ ಕ್ಲೇಟನ್ ಅಲ್ಲಿನ ಸುಂದರ ಪರಿಸರಕ್ಕೆ ಪೂರಕವಾಗಲಿ ಎಂದು  ಈ ಆ ಸಿಕಮೊರ್ ಸಸಿಯನ್ನು  ನೆಟ್ಟಿದ್ದ, ಇತಿಹಾಸ
ಪ್ರಸಿದ್ಧ ಹ್ಯಾಡ್ರಿಯನ್ ಗೋಡೆಯ ಪಕ್ಕದಲ್ಲಿ.   ರೋಮನ್ನರು ಇಂಗ್ಲೆಂಡಗೆ ಕಾಲಿಟ್ಟ ಆರಂಭಿಕ ಕಾಲವಾದ  ಒಂದನೆಯ ಶತಮಾನದಷ್ಟು ಹಿಂದೆಯೇ ೧೩೫ ಕಿಲೋಮೀಟರು ಉದ್ದದ ಆ ಗೋಡೆ  ಕಟ್ಟಲ್ಪಟ್ಟಿತ್ತು. ಆಧುನಿಕ ಕಾಲದಲ್ಲಿ  ಇಂಗ್ಲೆಂಡ್ ಮತ್ತು ಸ್ಕಾಟ್ಲೆಂಡಗಳ
ಗಡಿಯಂತೆಯೂ ಕಾಣುವ ಹ್ಯಾಡ್ರಿಯನ್ ಗೋಡೆಯ ಉತ್ಖತನದಲ್ಲಿ  ಜಾನ್ ಕ್ಲೇಟನ್ ಐವತ್ತು ವರ್ಷ ತೊಡಗಿಸಿಕೊಂಡವನು. ಅನಾದಿ ಕಾಲದ ಗೋಡೆಯ ಸುದೀರ್ಘ ಭವಿಷ್ಯದ ಬಗ್ಗೆ ಕಾಳಜಿ ಇದ್ದವನು. ಆ ಗೋಡೆಯ ಕಲ್ಲುಗಳನ್ನು ಅವರಿವರು ಒಂದೊಂದೇ ಜಾರಿಸಿ ಕೊಂಡುಹೋಗಿ
ಮುಂದೊಂದೊಂದು ದಿನ ಗೋಡೆಯೇ ನಶಿಸಿ ಹೋಗುವ ಬಗ್ಗೆ ಅವನಿಗೆ ಆತಂಕ ಇತ್ತು. ಶ್ರೀಮಂತ ಹಿನ್ನೆಲೆಯ ಆತ  ಕೆಲವು ಕೋಟೆಗಳ ಜೊತೆಗೆ ಹ್ಯಾಡ್ರಿಯನ್  ಗೋಡೆಯ ಇಪ್ಪತ್ತು ಮೈಲಿ ಉದ್ದದ ಭಾಗದ ವಾರೀಸುದಾರನೂ ಆಗಿದ್ದ. ಸಹಜವಾಗಿ ಗುಡ್ಡ ಕಣಿವೆಗಳು ಹತ್ತಿಳಿಯುವ ಆ  ಗೋಡೆಯ ಒಂದು ನೈಸರ್ಗಿಕ ತಗ್ಗಿನಲ್ಲಿ ಸಿಕಮೊರ್  ಸಸಿಯನ್ನು ನೆಟ್ಟಿದ್ದ.  ಸಸಿ ಬೆಳೆದದ್ದು, ಬಲವಾದದ್ದು, ಜಗತ್ತಿನ ದಿಕ್ಕುದೆಸೆಯ ಪ್ರವಾಸಿಗಳಿಗೆ ಆಗಂತುಕರಿಗೆ, ಅಭ್ಯಾಗತರಿಗೆ ನಿರ್ಮಲ ಘಳಿಗೆಯನ್ನು ಹಂಚಿದ್ದು,  ಮತ್ತೆ ಎರಡು ವರ್ಷಗಳ ಹಿಂದೆ ಇಬ್ಬರ ಗರಗಸಕ್ಕೆ ಬಲಿಯಾಗಿ ಹ್ಯಾಡ್ರಿಯನ್ ಗೋಡೆಯ ಮೇಲೆಯೇ  ಉರುಳಿ ಬಿದ್ದದ್ದು  ಎಲ್ಲವೂ ಮರವೊಂದರ ದೀರ್ಘ ಇತಿಹಾಸದ ಅನಿರೀಕ್ಷಿತ ಇತ್ತೀಚಿನ ಮುಂದುವರಿಕೆ.

ಉರುಳಿ ಬಿದ್ದ ಮರದ ಭವಿಷ್ಯವನ್ನು ಸಜ್ಜುಗೊಳಿಸುವ ಕಾರ್ಯ

೨೦೨೩ರ ೨೮ ಸೆಪ್ಟೆಂಬರ್ ಬೆಳಿಗ್ಗೆ, ಬಿದ್ದಿದ್ದ ಮರವನ್ನು ನೋಡಿದ ಸ್ಥಳೀಯರು ಆರಕ್ಷಕರಿಗೆ  ದೂರು ಕೊಟ್ಟಿದ್ದರು. ಸಣ್ಣ ಸಣ್ಣ ಇತಿಹಾಸ ಕತೆ ದಂತಕಥೆಗಳನ್ನೂ ಗೌರವಯುತವಾಗಿ ಸ್ಮರಿಸುವ, ಆರೈಕೆ ಮಾಡಿ ಕಾಯ್ದಿಟ್ಟು ಮತ್ತೆ ಪ್ರವಾಸಿಗರಿಗೂ ಆಸ್ಥೆಯಿಂದ ತೋರಿಸಿ ಹೆಮ್ಮೆ ಪಡುವ  ಸಂಸ್ಕೃತಿಯ ಇಂಗ್ಲೆಂಡನಲ್ಲಿ ಜಗತ್ಪ್ರಸಿದ್ಧ ಮರ ಉರುಳಿದ್ದು “ಹೈ ಪ್ರೊಫೈಲ್ ಕೇಸ್” ಆಗಿತ್ತು; ಮತ್ತೆ ಅಪರೂಪದ್ದೂ.  ತನಿಖೆಯಲ್ಲಿ
ಭಾಗವಹಿಸಿದ ವಿಧಿವಿಜ್ಞಾನ ತಂಡದ ಅಧಿಕಾರಿ ಹೇಳುವಂತೆ “ನನ್ನ ಮೂವತ್ತೊಂದು ವರ್ಷದ ಸೇವೆಯಲ್ಲಿ ಅಪರಾಧದ ಕುರುಹಿಗಾಗಿ ಮರವೊಂದರ ಪರೀಕ್ಷೆಯನ್ನು ಹಿಂದೆಂದೂ ಮಾಡಿದ್ದಿಲ್ಲ”. ತನಿಖೆ ಮುಂದುವರಿದು , ಸುಳಿವು ಸಿಕ್ಕಿ ೨೦೨೪ರ ಏಪ್ರಿಲ್ ಅಲ್ಲಿ
ಡೇನಿಯಲ್ ಮತ್ತು ಆಡಮ್ ಎನ್ನುವ ಕಂಬ್ರಿಯದ  ವಾಸಿಗಳನ್ನು   ಐತಿಹಾಸಿಕ ಮರವನ್ನು ಕಡಿದ, ಮರವನ್ನು ಬೀಳಿಸಿ ಚಾರಿತ್ರಿಕ  ಹ್ಯಾಡ್ರಿಯನ್  ಕಲ್ಲುಗೋಡೆಗೆ ಹಾನಿ ಮಾಡಿದ ಕ್ರಿಮಿನಲ್ ಆರೋಪದಲ್ಲಿ ವಿಚಾರಣೆಗೆ ಒಳಪಡಿಸಲಾಯಿತು. ಕೋರ್ಟಿನಲ್ಲಿ  ವಾದ-ಪ್ರತಿವಾದಗಳು ಜರುಗಿ ಅವರ ಅಪರಾಧ ಸಾಬೀತಾದದ್ದು ಮೊನ್ನೆಮೊನ್ನೆಯ ಅಂದರೆ ಇದೇ ವರ್ಷದ ಮೇ ತಿಂಗಳಿನಲ್ಲಿ. ವಿಚಾರಣೆಯ ಉದ್ದಕ್ಕೂ ಅಪರಾಧವನ್ನು ಅಲ್ಲಗಳೆಯುತ್ತಿದ್ದ, ಒಬ್ಬರು ಇನ್ನೊಬ್ಬರನ್ನು ದೂಷಿಸುತ್ತಿದ್ದ , ೩೯ ಹಾಗು ೩೨ ವರ್ಷದ ಅಪರಾಧಿ ಜೋಡಿ, ಮರ ಬೀಳುವ  ಸಂದರ್ಭವನ್ನು ತಮ್ಮ ಮೊಬೈಲ್ ಫೋನಿನಲ್ಲಿ ಚಿತ್ರೀಕರಿಸಿಕೊಂಡಿದ್ದರು. ಬಿದ್ದ
ಮರದ ಗೆಲ್ಲೊಂದನ್ನು ಪದಕದಂತೆ ತಮ್ಮೊಡನೆ ಒಯ್ದಿದ್ದರು. ೧೯೯೧ರಲ್ಲಿ ನಿರ್ಮಾಣಗೊಂಡ ರಾಬಿನ್ ಹುಡ್ ಸಿನೆಮಾದ ಒಂದು ಮುಖ್ಯ ಸನ್ನಿವೇಶದಲ್ಲಿ ಹಿನ್ನೆಲೆಯಲ್ಲಿದ್ದ ಮರ, ೨೦೨೩ರ ಸೆಪ್ಟೆಂಬರ್ ೨೭ರ ಜೋರು ಗಾಳಿಯ ನಡುಇರುಳಿನಲ್ಲಿ ಕಿಡಿಗೇಡಿಗಳ ಬ್ಯಾಟರಿ ಚಾಲಿತ ಗರಗಸಕ್ಕೆ ತುತ್ತಾಗಿ ಮುನ್ನಲೆಯಲ್ಲಿ ಅಂತಿಮ ಉಸಿರಳೆದದ್ದು ಎಂತಹ ವಿಪರ್ಯಾಸ! ನಿಮಿಷಗಳಲ್ಲಿ ಆರಂಭವಾಗಿ ಮುಗಿಯುವ ಮರ ಕಡಿಯುವ ಸಂದರ್ಭವನ್ನು ನೋಡಿದವರಲ್ಲಿ ವಿಭಿನ್ನ  ಭಾವನೆಗಳು ಹುಟ್ಟಬಹುದಾದರೂ, ಇನ್ನೇನು ಬೀಳಲಿರುವ ಮರಕ್ಕೆ, ಒಂದು ಕ್ಷಣಕ್ಕೆ ತನ್ನನು ಬದುಕಿಸಲು ಆ ರಾಬಿನ್ ಹುಡ್ ಆದರೂ ಬರಬಾರದಿತ್ತೇ ಎಂದೂ ಅನಿಸಿರಬಹುದು, ತನ್ನನ್ನು ನೆಟ್ಟು ಬೆಳೆಸಿದ  ಜಾನ್ ಕ್ಲೇಟನ್ ಕಣ್ಣೆದುರು ಬಂದಿರಬಹುದು. ತನ್ನ ನೆರಳಲ್ಲಿ ತಂಗಿ ಮುಂದುವರಿದ ಕಾಲ್ನಡಿಗೆಯವರು, ತನ್ನ ಆಸುಪಾಸಿನ ಕ್ಷಣಭಂಗುರದಲ್ಲಿ ಲೀನರಾಗಿ ಮೈಮರೆತ ಲಕ್ಷ ಲಕ್ಷ ಅನಾಮಿಕ ಅಜ್ಞಾತ ಪ್ರವಾಸಿಗರು ಸ್ಮರಣೆಗೆ ಬಂದಿರಬಹುದು. ಬಿಡಿ,  ಫೋನು ತಪಾಸಣೆಯಲ್ಲಿ  ದೊರೆತ ಆ ವಿಡಿಯೋ ತುಣುಕು, ಜನರಲ್ಲಿ
ಎಬ್ಬಿಸುವ ಭಾವಲಹರಿ ಏನೇ ಇದ್ದರೂ ಕಾನೂನು ತನಿಖೆಯ ಮಟ್ಟಿಗೆ ಅತಿ ಅಗತ್ಯವಾದ ಪುರಾವೆಯನ್ನು  ಒದಗಿಸಿತ್ತು. ಮತ್ತೆ ನ್ಯೂ ಕಾಸಲ್ ಕ್ರೌನ್  ಕೋರ್ಟ್ ಆ ಇಬ್ಬರನ್ನು ಅಪರಾಧಿ ಎಂದು ಘೋಷಿಸಲು ಪ್ರಮುಖ ಆಧಾರವಾಗಿ ಒದಗಿತ್ತು.

ಪ್ರಸಿದ್ಧ ಮರದ ಅಕಾಲಿಕ ಸಾವಿನ  ಸುದ್ದಿ ಇಂಗ್ಲೆಂಡಿನ ಒಳಗಿನಿಂದ, ಹೊರಗಿನಿಂದ ತೀವ್ರ ಪ್ರತಿಕ್ರಿಯೆ ಪಡೆದಿತ್ತು. ಸಿಟ್ಟು, ಆಘಾತ, ಆಶ್ಚರ್ಯಗಳು ಸಾಮಾಜಿಕ ಜಾಲತಾಣವನ್ನು ತುಂಬಿದವು. ಸುದ್ದಿ ಪತ್ರಿಕೆಯ ಮುಖಪುಟದಲ್ಲಿ, ವೆಬ್ ಪೇಜ್ ಗಳಲ್ಲಿ ವಸಂತ ವೈಶಾಖದ ಹಸಿರಿನಲ್ಲಿ,  ಶರತ್ ಶಿಶಿರಗಳ  ಹಿಮಹೊದಿಕೆಯಲ್ಲಿ ವಿಭಿನ್ನ ರೂಪದ ಮರದ  ಚಿತ್ರಗಳು ಕಾಣಿಸಿಕೊಂಡವು. ಕೆಲವರು ಭಾವುಕರಾಗಿ ಕವಿತೆಗಳನ್ನು ಕಟ್ಟಿ ಹಾಡಿದ್ದರು. ಕವಿತೆಯ ಸಾಲುಗಳನ್ನು  ಕೇಳಿದ ಕೆಲವರು ಕಣ್ಣೀರು ಹಾಕಿದರು. ಪ್ರಕೃತಿ ಸೃಜಿತ ಗಾಳಿಯ ನಿನಾದ, ಮನುಷ್ಯ ನಿರ್ಮಿತ  ಗರಗಸದ ಕರ್ಕಶ ಸದ್ದುಗಳು ಜೊತೆಯಾದ ಹಿನ್ನೆಲೆ ಸಂಗೀತದಲ್ಲಿ ಶವವಾಗುವ ಮರದ ಚಿತ್ರತುಣುಕು , ಸಾಮಾಜಿಕ ಮಾಧ್ಯಮದಲ್ಲಿ ಅನಾಥ ಅಸಹಾಯಕ ಸಾಕ್ಷಿಗಳಂತೆ ಓಡಾಡಿದವು.

೨೦೨೩ರ ಅಕ್ಟೋಬರನಲ್ಲಿ , ಕಡಿದುಬಿದ್ದ ಮರವನ್ನು ಖಂಡ ತುಂಡು ಮಾಡಿ ಕ್ರೇನ್ ಮೂಲಕ ಸಾಗಿಸಲಾಯಿತು. ಅಕಾಲಿಕ ಸಾವಿನ ಪುರಾತನ ಮರದ ಕತೆಯ ಮುಂದುವರಿದ ಪುಟವಾಗಿ, ಇಲ್ಲಿನ ಹಲವು ನೈಸರ್ಗಿಕ ತಾಣಗಳ ಉಸ್ತುವಾರಿ ವಹಿಸಿಕೊಂಡಿರುವ ನ್ಯಾಷನಲ್ ಟ್ರಸ್ಟ್ ಸಂಸ್ಥೆ ಆ
ಮರದಿಂದ ನಲವತ್ತೊಂಬತ್ತು ಸಸಿಗಳನ್ನು ಬೆಳೆಸಿ ದೇಶದ ಬೇರೆ ಬೇರೆ ಚ್ಯಾರಿಟಿ ಮತ್ತಿತರ ಸಂಸ್ಥೆಗಳಿಗೆ ನೀಡಿತು. ತನ್ನ ಕೊನೆಯ ಕಾಲದಲ್ಲಿ ನಲವತ್ತೊಂಬತ್ತು ಅಡಿ ಉದ್ದ ಇದ್ದ ಮರದ ನೆನಪಿಗಾಗಿ ಬೆಳೆಸಿದ  ೪೯ ಸಸಿಗಳನ್ನು ಚ್ಯಾರಿಟಿ   ಸಂಸ್ಥೆಗಳಿಂದ ಪಡೆಯಲು ಜನರಿಂದ  ಅರ್ಜಿಗಳನ್ನು ಆಹ್ವಾನಿಸಲಾಯಿತು. ೪೯ ಗಿಡಗಳನ್ನು ಪಡೆಯಲು ಯುನೈಟೆಡ್ ಕಿಂಗ್ಡಮ್ ನ ಬೇರೆಬೇರೆ ಭಾಗಗಳಿಂದ  ೫೦೦ ಅರ್ಜಿಗಳು ಬಂದಿದ್ದವು. ಪ್ರತಿಯೋರ್ವ ಅರ್ಜಿದಾರರೂ ತಮಗ್ಯಾಕೆ ಒಂದು ಸಸಿ ಬೇಕು ಎಂದು ಬರೆದಿದ್ದರು. ಸಸಿ ಹಂಚುವ ಅಭಿಯಾನವನ್ನು “ನಾಳಿನ ಭರವಸೆಗಾಗಿ ಮರಗಳು” ಎಂದೂ ಕರೆಯಲಾಗಿತ್ತು. ನಲವತ್ತೊಂಬತ್ತರಲ್ಲಿ ಒಂದು ಸಸಿ, ಹ್ಯಾಡ್ರಿಯನ್ ಗೋಡೆಯಿಂದ ಬಹಳವೇನೂ ದೂರದಲ್ಲಿರದ ಹೆಕ್ಸ್ಹಮ್ ಪ್ರಾಂತ್ಯದಲ್ಲಿ ಮುಂದಿನ ಚಳಿಗಾಲಕ್ಕೆ ನೆಲ ನೆಲೆ ಕಾಣಲಿದೆ.  ಹೋಲಿ ನ್ಯೂಟನ್ ಎನ್ನುವಾಕೆಯ ಸಮಾಧಿಯ ಬಳಿ. ಹದಿನೈದು ವರ್ಷದವಳಿದ್ದಾಗ ಸಂಬಂಧ ಕೊನೆಗೊಂಡದ್ದನ್ನು ಒಪ್ಪಲಾಗದ ಮಾಜಿ ಪ್ರಿಯಕರ ಆಕೆಯನ್ನು ಕೊಲೆ ಮಾಡಿದ್ದ. ಕೊಲೆಯಾದ
ಮಗಳ ನೆನಪಿನಲ್ಲಿ ಬದುಕುತ್ತಿರುವ ಆಕೆಯ ಹೆತ್ತವರು ತಾವು ಪಡೆಯಲಿರುವ ಸಿಕಮೋರ್ ಸಸಿ ಅಳಿದ  ಮಗಳನ್ನು ಸ್ಮರಿಸುವ ಹೊಸ ದಾರಿಯಾಗಿದೆ ಎಂದು ಖುಷಿ ಪಡುತ್ತಿದ್ದಾರೆ. ಇನ್ನುಳಿದ ನಲವತ್ತೆಂಟು ಸಸಿಗಳೂ ಯು.ಕೆಯ ಬೇರೆ ಬೇರೆ ಭಾಗಗಳನ್ನು ಸೇರಿ ಅಲ್ಲೆಲ್ಲ,
ನಾಶವಾದ ಮರದ ಕತೆಯನ್ನು ಹೇಳಲಿವೆ  ನೆನಪನ್ನು ಹಸಿರಾಗಿಡಲಿವೆ .

ಒಂದು ಸಣ್ಣ ಸಹಜ ಸುಂದರ ಖುಷಿಯನ್ನು  ನಿರಂತರವಾಗಿ  ನೂರೈವತ್ತು ವರ್ಷಗಳ ಕಾಲ ಹಂಚಿದ,  ಪ್ರಾಕೃತಿಕ ದ್ರಶ್ಯಕಾವ್ಯದಲ್ಲಿ ಭೂಮಿ ಆಕಾಶದಷ್ಟೇ ಚಿರಂತನ ಎನಿಸಿದ ಮರ, ಕ್ಷುಲ್ಲಕ ಕಿಡಿಗೇಡಿತನದ ಪರಿಣಾಮವಾಗಿ  ಇಲ್ಲದಾದಾಗ, ನಿತ್ಯವೂ ನಮ್ಮನ್ನು ಕಾಯುವ
ಬದುಕಿನ ಭರವಸೆಯೇ ಕರಗಿ ಹೋಗುವ ಸಾಧ್ಯತೆ ಇದೆ. ಆದರೆ ಅಂತಹ ವಿಷಣ್ಣ ಸಾಧ್ಯತೆಯನ್ನು ಎದುರಿಸುವ ,ಮತ್ತೆ ಚೇತೋಹಾರಿ ಉತ್ಸಾಹವನ್ನು ನಮ್ಮ ಒಳಹೊರಗೆ ತುಂಬಿಸುವ  ಹೋರಾಟವನ್ನು ನಲವತ್ತೊಂಬತ್ತು ಸಸಿಗಳು ಆಗಲೇ ಆರಂಭಿಸಿವೆ. ಇನ್ನು ಈಶಾನ್ಯ ಇಂಗ್ಲೆಂಡಿನ ಹ್ಯಾಡ್ರಿಯನ್ ಗೋಡೆಯ ಪಕ್ಕದ  ಕಡಿದ ಬುಡದಲ್ಲೂ  ಚಿಗುರೆಲೆಗಳು  ಮೊಳೆತು “ಹೊಸತು ಜನ್ಮ”ದ  ಸೂಚನೆ ಕಾಣುತ್ತಿದೆ. ಒಂದು ವೇಳೆ ಆ ಮೊಳಕೆಗಳು ಚಿಗುರೆಲೆಗಳು ಬೆಳೆಯುತ್ತಲೇ ಹೋದರೆ ಮುಂದಿನ ಇನ್ನೂರು ವರ್ಷಗಳಲ್ಲಿ, ಎರಡು ವರ್ಷದ ಹಿಂದೆ ಬೀಳುವ ಮೊದಲಿನ  ಮರದಷ್ಟೇ ದೊಡ್ಡ ಮರವೊಂದು ಆಕಾರ ತಳೆಯಬಹುದು ಎಂದು ವೃಕ್ಷ ಶಾಸ್ತ್ರಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಬರಡು ಬುಡವನ್ನೋ ಎಳೆಯ ಚಿಗುರನ್ನೋ ಅಥವಾ ಮುಂದೆಂದೋ ಅಲ್ಲೊಂದು ಮರ ಎದ್ದು ನಿಲ್ಲುವುದನ್ನೋ ಕನವರಿಸುತ್ತ  ಬರುತ್ತಿರುವವರಿಗೆ  “ಗೌರವದಿಂದ ನಡೆದುಕೊಳ್ಳಿ”ಎನ್ನುವ ಎಚ್ಚರಿಕೆಯ ಫಲಕ ಅಲ್ಲೇ  ತೂಗುಹಾಕಲ್ಪಟ್ಟಿದೆ. ಬಂದು ಮರಳುವವರಿಗೂ ,ಮರಳಿ ಬರುವವರಿಗೂ ,  ನಾಳಿನ  ಭರವಸೆ ಜೀವಂತವಾಗಿದೆ.

—————————

ಯೋಗೀಂದ್ರ ಮರವಂತೆ