ಕೃಷ್ಣೆ – ತುಂಗೆಯರ ನಾಡಿನಲ್ಲಿ ಹರಿದಾಸಸಾಹಿತ್ಯ – ಕೆಲವು ಅಂಶಗಳು.

****************************

ಸಾಹಿತ್ಯದ ಮೂಲ ಉದ್ದೇಶವೇ ಜೀವನದ ಮೌಲ್ಯಗಳನ್ನು ತಿಳಿಸಿ ಸಾಮಾನ್ಯರ ಬದುಕನ್ನು ಉದಾತ್ತಗೊಳಿಸುವುದು.  ಕನ್ನಡ ಸಾಹಿತ್ಯದಲ್ಲಿ ಈ ಉದ್ದೇಶ ಶಿವಶರಣರಿಂದಲೂ ಹರಿದಾಸರಿಂದಲೂ ಸಾಧಿತವಾಗಿರುವುದನ್ನು ಕಾಣುತ್ತೇವೆ. ಹರಿದಾಸರ ಸಾಧನೆ ಮೂಲವಾಗಿ ಆಧ್ಯಾತ್ಮಿಕ ಪ್ರಪಂಚದಲ್ಲಿ ಆದರೂ ಅವರು ಸಾಮಾಜಿಕ ಜೀವನವನ್ನು ಕಡೆಗಣಿಸಿದವರಲ್ಲ. ಕಾವ್ಯ ಸೃಷ್ಟಿ ಮಾಡುವ ಕವಿ ಸಮಾಜದಿಂದಲೇ ಮೂಡಿ ಬಂದಿರುತ್ತಾನೆ, ಆದ್ದರಿಂದ ಸಮಾಜವನ್ನು ಬಿಟ್ಟು ಪ್ರತ್ಯೇಕವಾಗಿ ಉಳಿದ ಸಾಹಿತ್ಯಕ್ಕೆ ಇಲ್ಲಿ ಅಸ್ತಿತ್ವ ಇಲ್ಲ. ಕಾವ್ಯ ಸೃಷ್ಟಿಯ ಈ ಪ್ರಕ್ರಿಯೆಯಲ್ಲಿ ಸಮಾಜ ಮತ್ತು ಸಾಹಿತ್ಯಗಳ ಸಂಬಂಧ ಜೀವಂತವಾಗಿ, ಪರಸ್ಪರ ಪೂರಕವಾಗಿ ಇರಬೇಕಾದ ಅಗತ್ಯ ಇದೆ. 

ಕರ್ನಾಟಕದಲ್ಲಿ ಭಕ್ತಿಯ ಹೊನಲನ್ನು ಜನಸಾಮಾನ್ಯರ ಭಾಷೆ ಕನ್ನಡಕ್ಕೆ ತಂದ ಯಶಸ್ಸು ಶರಣರ ವಚನಗಳು ಮತ್ತು ದಾಸರ ಸಾಹಿತ್ಯಕ್ಕೆ ಸಲ್ಲುತ್ತದೆ. ವಚನಕಾರರ ಮೂಲ ಕಾಳಜಿ ಸಾಮಾಜಿಕವಾಗಿದ್ದರೆ, ದಾಸಸಾಹಿತ್ಯದ ಪ್ರಮುಖ ಧ್ಯೇಯ ಭಕ್ತಿಸಿದ್ಧಾಂತವಾಗಿತ್ತು ಅನ್ನುವುದು ಸ್ಪಷ್ಟ.
ಧರ್ಮದ ಮೂಲಕ ಸಮಾಜವನ್ನು ಕಾಣಲು, ತಿದ್ದಲು ಶರಣರು ಮತ್ತು ದಾಸರು ಈ ಅಗತ್ಯವನ್ನು ಮನಗಂಡರು. ಧರ್ಮ ಮುಖ್ಯ ಮಾಧ್ಯಮವಾದರೆ ಸಮಾಜ ಚಿಂತನೆ ಇವರ ಮುಖ್ಯ ಕಾಳಜಿಯಾಗಿದೆ. ಅಂಧಾಚರಣೆಯ ನಿರ್ಮೂಲನ, ವ್ಯಕ್ತಿತ್ವ ನಿರ್ಮಾಣ, ತನ್ಮೂಲಕ ಆರೋಗ್ಯಕರ ವಾತಾವರಣದ ನಿರ್ಮಾಣಕ್ಕೆ ಶರಣರು ಮತ್ತು ದಾಸರು ಯತ್ನಿಸಿದರು. ಈ ಯತ್ನದ ಕಾರಣವಾಗಿ ವಚನಗಳು, ಕೀರ್ತನೆಗಳು, ಸುಳಾದಿ ಮತ್ತು ಉಗಾಭೋಗಗಳು ಮೂಡಿಬಂದವು. ಭಕ್ತಿಸಿದ್ಧಾಂತದ ಜೊತೆಗೆ ಸಚ್ಚಾರಿತ್ರ್ಯ, ಸದಾಚಾರ ಹಾಗೂ ಸಾತ್ವಿಕ ಜೀವನದ ಕಡೆಗೂ ಈ ಸಾಹಿತ್ಯದ ಹರಿವಿದೆ. ಲೋಕ ನೀತಿಯ ಮಾತುಗಳಲ್ಲಿ ಸುಖಜೀವನದ ಸಂದೇಶ ನೀಡುವ ಮೂಲಕ ಸಾರ್ಥಕ ಬದುಕಿನ ಕರೆ ನೀಡಿದ್ದಾರೆ ಎನ್ನುವುದೂ ಸತ್ಯ.

ದಾಸ ಸಾಹಿತ್ಯದಲ್ಲಿ ಹಲವಾರು ರೀತಿಯ ರಚನೆಗಳಿವೆ – ಕೀರ್ತನೆಗಳು, ಸುಳಾದಿ, ಉಗಾಭೋಗಗಳು ಮುಖ್ಯವಾದವು. ಇವೆಲ್ಲ ರಚನೆಗಳು ಮೂಲವಾಗಿ ಸಂಗೀತಕ್ಕೆ ಒಳಪಡುವ ರೂಪದಲ್ಲಿವೆ. ಸುಳಾದಿ ಮತ್ತು ಉಗಾಭೋಗಗಳಿಗೆ ವಚನಸಾಹಿತ್ಯ ಪ್ರಕಾರದ ಪ್ರೇರಣೆ ಇರಬಹುದು ಎನ್ನುವ ಮಾತಿದೆ. ಇನ್ನು ಹಲವರ ಪ್ರಕಾರ ಶಿವಶರಣರ ವಚನಗಳು ಉಕ್ತಿಗಳು, ದಾಸಸಾಹಿತ್ಯ ಗೇಯ ಪ್ರಕಾರ - ಹೀಗಾಗಿ ಸಂಗೀತದ ಛಾಯೆರುತ್ತದೆ ಎನ್ನುವುದು. ಸುಳಾದಿ ಮತ್ತು ಉಗಾಭೋಗಗಳಲ್ಲಿ ಧಾರ್ಮಿಕ ವಿಚಾರಗಳು, ಆಧ್ಯಾತ್ಮಿಕ ತತ್ವಗಳು ಮತ್ತು ದೈವ ಸ್ತುತಿಗಳ ನಿರೂಪಣೆ ಇದೆ. ಭಕ್ತನಾದವನ ಆರ್ತಭಾವ ಮತ್ತೂ ಅಂತರಂಗದರ್ಶನವು ಆಗುತ್ತದೆ.

ಕೃಷ್ಣ ತುಂಗೆಯರ ಮಧ್ಯದಲ್ಲಿರುವ ರಾಯಚೂರು ಜಿಲ್ಲೆ ಹಲವು ರೀತಿಯ ಕಲೆ ಸಾಹಿತ್ಯ. ಸಂಸ್ಕೃತಿಗಳ ನೆಲೆಬೀಡಾಗಿದೆ. ಹರಿದಾಸ ಸಾಹಿತ್ಯಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿ ಹರಿದಾಸರ ತೊಟ್ಟಿಲು ಎಂದು ಹೆಸರಾಗಿದೆ.

ಹರಿದಾಸ ಸಾಹಿತ್ಯವನ್ನು ವಿದ್ವಾಂಸರು ಹಲವು ರೀತಿಗಳಲ್ಲಿ ವಿಭಾಗಿಸಿದ್ದಾರೆ. ಶ್ರೀ ರಾ. ಸ್ವಾ. ಪಂಚಮುಖಿಯವರ ಪ್ರಕಾರ 4 ಘಟ್ಟಗಳಿವೆ – 1. ಮಧ್ವಾಚಾರ್ಯರ ಶಿಷ್ಯ ನರಹರಿ ತೀರ್ಥರ ಕಾಲ, 2. ಕೃಷ್ಣದೇವರಾಯನ ಕಾಲ, 3. ವಿಜಯದಾಸರ ಮತ್ತು ಅವರ ಶಿಷ್ಯರ ಕಾಲ ಮತ್ತು 4. ನಂತರದ ಕಾಲ.

ಡಾ. ಆರ್ ಜಿ ಗುಡಿಯವರು ಇದನ್ನೇ 1. ಶ್ರೀಪಾದರಾಜಪೂರ್ವ ಯುಗ (ಕ್ರಿಶ 879-1450), 2. ಶ್ರೀಪಾದರಾಜಯುಗ (ಕ್ರಿಶ 1451-1565), 3. ವಿಜಯದಾಸಯುಗ (ಕ್ರಿಶ 1566-1809) ಮತ್ತು 4. ಶಿಷ್ಯ-ಪ್ರಶಿಷ್ಯ ಯುಗ (ಕ್ರಿಶ 1810 ರಿಂದ ಮುಂದೆ) ಎಂದು ವಿಭಾಗಿಸಿದ್ದಾರೆ.

ದಾಸಸಾಹಿತ್ಯದ ಬೆಳವಣಿಗೆಯ ದೃಷ್ಟಿಯಿಂದ 12ನೆಯ ಶತಮಾನದಿಂದ 19ನೆಯ ಶತಮಾನದವರೆಗಿನ ಕಾಲವನ್ನು ಮೂರು ಘಟ್ಟಗಳಾಗಿ ವಿಂಗಡಿಸಬಹುದು. ನರಹರಿತೀರ್ಥರಿಂದ ಪುರಂದರ-ಕನಕದಾಸರವರೆಗಿನ ಅವಧಿ, ವಿಜಯದಾಸರಿಂದ ಜಗನ್ನಾಥದಾಸರವರೆಗಿನ ಅವಧಿ ಮತ್ತು ಅವರ ಶಿಷ್ಯ-ಪ್ರಶಿಷ್ಯರ ಅವಧಿ.

ಕನ್ನಡದಲ್ಲಿ ರಚಿತವಾದ ಹರಿದಾಸಸಾಹಿತ್ಯದ ಮೂಲ ಮಧ್ವಾಚಾರ್ಯರ ಶಿಷ್ಯ ನರಹರಿತೀರ್ಥರಿಂದ (ಅಂಕಿತ: ನರಹರಿ / ರಘುಪತಿ) ಆರಂಭವಾದದ್ದು. ಅವರ ರಚನೆಗಳಲ್ಲಿ ನಾಲ್ಕು ಮಾತ್ರ ಈಗ ಲಭ್ಯವಿವೆ (ಎಂತು ಮರುಳಾದೆ, ತಿಳಕೋ ನಿನ್ನೊಳಗೆ ನೀನು, ಹರಿಯೇ ಇದು ಸರಿಯೇ ಮತ್ತು ಎದುರ್ಯಾರೊ ಗುರುವೇ).

ಅದರ ನಂತರದ ರಾಜಕೀಯ, ಸಾಮಾಜಿಕ ಪರಿಸ್ಥಿತಿಗಳಿಂದ ಬತ್ತಿಹೋದಂತೆನಿಸಿದರೂ, ಅರವತ್ತು ಜನ ’ಆದ್ಯ’ರಿಂದ ಮಂದಗಾಮಿಯಾಗಿ ಮುಂದುವರೆಸಲ್ಪಟ್ಟಿತು (ಶ್ರೀ ಗೋರೆಬಾಳು ಹನುಮಂತರಾಯರು / ಕಪಟರಾಳ ಕೃಷ್ಣರಾಯರು). ಸಂಖ್ಯೆಯಲ್ಲಿ ಮಹತ್ವಪೂರ್ಣವಲ್ಲದಿದ್ದರೂ, ಈ ರಚನೆಗಳ ಪ್ರಭಾವ ಪುರಂದರ-ಕನಕರ ಮೇಲೆ ಆಗಿರುವುದಂತೂ ಸತ್ಯ ಎನ್ನುವುದು ವಿದ್ವಾಂಸರ ಅಭಿಪ್ರಾಯ.

ದಾಸಸಾಹಿತ್ಯವಾಹಿನಿ ಅಲ್ಲಿಂದ ಮುಂದೆ ತನ್ನ ಆಳ ವೈಶಾಲ್ಯತೆಗಳನ್ನು ಪಡೆದುಕೊಂಡದ್ದು ಎರಡು ನೂರು ವರ್ಷಗಳ ತರುವಾಯ ಶ್ರೀಪಾದರಾಜರ ಕಾಲದಲ್ಲಿ. ಮುಳುಬಾಗಿಲಿನ ಶ್ರೀಪಾದರಾಜರು ಶ್ರೀರಂಗವಿಟ್ಠಲ ಅನ್ನುವ ಅಂಕಿತದಲ್ಲಿ ಅನೇಕ ರಚನೆಗಳನ್ನು ಮಾಡಿದ್ದಲ್ಲದೇ, ಅವನ್ನು ಪೂಜಾವಿಧಾನಗಳ ಅವಿಭಾಜ್ಯ ಅಂಗವಾಗಿ ಹಾಡಿಸಲೂ ಆರಂಭಿಸಿದರು.

ಶ್ರೀಪಾದರಾಜರ ಶಿಷ್ಯ ವ್ಯಾಸರಾಜರದು ಹರಿದಾಸಸಾಹಿತ್ಯದ ಅಭಿವೃದ್ಧಿಯಲ್ಲಿ ವಿಶೇಷ ಸ್ಥಾನವಿದೆ. ಸಿರಿಕೃಷ್ಣ ಅಂಕಿತದಲ್ಲಿ ಅವರು ಅನೇಕ ರಚನೆಗಳನ್ನು ಮಾಡಿದ್ದಲ್ಲದೇ, ಕೀರ್ತನೆಗಳಿಗೆ ಸಂಗೀತ-ನರ್ತನಗಳ ಸಂಯೋಜನೆ ಇವರ ಕಾಲದಲ್ಲಿ ನಡೆದು, ಕೀರ್ತನೆಗಳು ಜನಪ್ರಿಯವಾದವು. ಮಠಾಧಿಪತಿಗಳೂ, ವಿಜಯನಗರದ ರಾಜಗುರುಗಳೂ ಆಗಿದ್ದ ವ್ಯಾಸರಾಜರು ವ್ಯಾಸಕೂಟ (ಸಂಸ್ಕೃತ ಗ್ರಂಥ-ವ್ಯಾಖ್ಯಾನಕಾರರು) ಮತ್ತು ದಾಸಕೂಟ (ಹರಿದಾಸಸಾಹಿತ್ಯಕಾರರು) ಎರಡಕ್ಕೂ ಸಂರಕ್ಷಕರಾಗಿದ್ದರು.

ವ್ಯಾಸರಾಜರ ಶಿಷ್ಯ ವಾದಿರಾಜರು ಸಂಸ್ಕೃತವಲ್ಲದೇ, ಕನ್ನಡದಲ್ಲೂ ಅನೇಕ ಕೃತಿಗಳನ್ನು ಹಯವದನ ಎಂಬ ಅಂಕಿತದಲ್ಲಿ ರಚಿಸಿದರು. ಜಾನಪದ ಸಾಹಿತ್ಯ ಪ್ರಕಾರಗಳನ್ನೂ ಅಳವಡಿಸಿಕೊಂಡರು ಅಲ್ಲದೇ ತುಳು ಭಾಷೆಯಲ್ಲೂ ರಚನೆಗಳನ್ನು ಮಾಡಿದರು.

ಈ ಹಂತದಲ್ಲಿದ್ದಾಗ, ದಾಸಸಾಹಿತ್ಯವನ್ನು ಶಿಖರಪ್ರಾಯವಾಗಿಸಿದ ಕೀರ್ತಿ ಪುರಂದರದಾಸರು ಮತ್ತು ಕನಕದಾಸರಿಗೆ ಸಲ್ಲಬೇಕು. ಅನೇಕ ಆಯಾಮಗಳಲ್ಲಿ ದಾಸಸಾಹಿತ್ಯದ ಬೆಳವಣಿಗೆ, ಜನಪ್ರಿಯತೆಗೆ ಕಾರಣವಾದ ವಿಜಯನಗರದ ಉಚ್ಛ್ರಾಯದ ಈ ಕಾಲ ’ದಾಸಸಾಹಿತ್ಯದ ಸುವರ್ಣಯುಗ’ ಎನ್ನಿಸಿಕೊಂಡಿತು.

ಅಪಾರ ಕೀರ್ತನೆಗಳನ್ನು, ಸುಳಾದಿಗಳನ್ನು, ಉಗಾಭೋಗ ಮತ್ತಿತರ ಪ್ರಕಾರಗಳನ್ನು ರಚಿಸುವ ಮೂಲಕ ಪುರಂದರದಾಸರು (ಪುರಂದರವಿಟ್ಠಲ) ದಾಸಸಹಿತ್ಯ-ಸಂಗೀತಕ್ಕೆ ಅಪಾರ ಕೊಡುಗೆ ನೀಡಿ ’ಕರ್ನಾಟಕ ಸಂಗೀತದ ಪಿತಾಮಹ’ ಎನ್ನಿಸಿದರು. ತಮ್ಮ ರಚನೆಗಳಲ್ಲಿ ಬುಡುಬುಡುಕೆ ಪದ, ಲಾವಣಿಯಂತಹ ಜಾನಪದ ಮಟ್ಟುಗಳನ್ನು ಧಾರಾಳವಾಗಿ ಬಳಸಿಕೊಂಡರು. ವೇದಾಂತ ಮತ್ತು ಜನಸಾಮಾನ್ಯರನ್ನು ಬೆಸೆದರು.

ಇವರ ಸಮಕಾಲೀನರಾದ ಕನಕದಾಸರು (ಕಾಗಿನೆಲೆಯಾದಿಕೇಶವ) ತಮ್ಮ ವಿಶಿಷ್ಟ ವ್ಯಕ್ತಿತ್ವ, ಕ್ರಾಂತಿಕಾರಿ ಧೋರಣೆ ಹಾಗೂ ಕಾವ್ಯಶಕ್ತಿಗಳಿಂದ ಮಹತ್ವದ ಸ್ಥಾನ ಪಡೆದವರು. ಒಗಟಿನಂತಿರುವ ’ಮುಂಡಿಗೆ’ ಎಂಬ ಹೊಸ ಕಾವ್ಯಪ್ರಕಾರವನ್ನು ದಾಸಸಾಹಿತ್ಯದಲ್ಲಿ ಸೇರಿಸಿದ್ದಲ್ಲದೇ, ಡೊಳ್ಳಿನ ಹಾಡು ಮತ್ತು ಕಣಪದಗಳ ರಚನೆಯಿಂದ ಜಾನಪದದ ಸೊಗಡನ್ನೂ ತಂದರು.

ವಿಜಯನಗರ ಸಾಮ್ರಾಜ್ಯದ ಪತನಾನಂತರ ದಾಸಸಾಹಿತ್ಯವು ತನ್ನ ಅವನತಿಯತ್ತ ಸಾಗಿತು. ಆ ಕಾಲದ ರಾಜಕೀಯ, ಸಾಮಾಜಿಕ ಅಸ್ಥಿರತೆಗಳ ಕಾವು ತಟ್ಟಿದರೂ, ಈ ಸಾಹಿತ್ಯವಾಹಿನಿಯು ಪೂರ್ತಿ ಬತ್ತದೇ ಹರಿಯುತ್ತಿತ್ತು ಅನ್ನುವುದಕ್ಕೆ ಬಿಜಾಪುರ (ಈಗಿನ ವಿಜಯಪುರ) ಪ್ರಾಂತದ ಕಾಖಂಡಕಿ ಮಹಿಪತಿರಾಯರು ಮತ್ತು ಅವರ ಮಗ ಕೃಷ್ಣರಾಯರಿಂದ ರಚಿತವಾದ ಅನೇಕ ಕೃತಿಗಳೇ ಸಾಕ್ಷಿ. ಕೋಲಾಟದ ಪದ, ಕೊರವಂಜಿಯ ಪದ, ಸುಗ್ಗಿಪದಗಳಂತಹ ಜಾನಪದ ಮಟ್ಟುಗಳು ಇವರ ರಚನೆಗಳಲ್ಲಿ ಕಂಡುಬರುತ್ತವೆ.

ಇಲ್ಲಿಂದ ಮುಂದೆ ಹರಿದಾಸಸಾಹಿತ್ಯಕ್ಕೆ ಮತ್ತೆ ಚಾಲನೆ ದೊರೆತದ್ದು ಮಂತ್ರಾಲಯದ ರಾಘವೇಂದ್ರರ (ಕೃಷ್ಣ) ಕಾಲದಲ್ಲಿ. ಹಂಪಿಯಲ್ಲಿ ಕೇಂದ್ರಿತವಾಗಿದ್ದ ಹರಿದಾಸಪಂಥದ ಕೇಂದ್ರ ಮಾನ್ವಿ, ಲಿಂಗಸೂಗೂರು, ಕಾಖಂಡಿಕಿ, ಮಳಖೇಡ ಮೊದಲಾದ ಊರುಗಳಿಗೆ ಹಬ್ಬಿ ಮತ್ತೆ ಬೆಳೆಯತೊಡಗಿತು. ಈ ಸಾಹಿತ್ಯಪ್ರಕಾರವನ್ನು ಮತ್ತೆ ವೈಭವಯುತವಾಗಿಸಿದ್ದು ರಾಯಚೂರು ಜಿಲ್ಲೆಯ ಚೀಕಲಪರವಿ ಗ್ರಾಮದ ವಿಜಯದಾಸರು (ವಿಜಯವಿಟ್ಠಲ). ಭಾವನಾಪ್ರಧಾನವಾಗಿದ್ದ ದಾಸಸಾಹಿತ್ಯ, ಇವರ ಕೃತಿಗಳಲ್ಲಿ ತತ್ವಪ್ರಧಾನವಾಗಿ ಕಂಡುಬರುತ್ತದೆ.

ವಿಜಯದಾಸರ ಸಮಕಾಲೀನರಾದ ಕಾಖಂಡಿಕಿ ಪ್ರಸನ್ನವೆಂಕಟದಾಸರು (ಪ್ರಸನ್ನವೆಂಕಟ), ಶಿಷ್ಯರಾದ ಭಾಗಣ್ಣ (ಗೋಪಾಲವಿಟ್ಠಲ), ತಿಮ್ಮಣ್ಣ (ವೇಣುಗೋಪಾಲ), ಮೋಹನದಾಸರು (ಮೋಹನವಿಠಲ), ಮತ್ತು ಕಲ್ಲೂರು ಸುಬ್ಬಣ್ಣ (ವ್ಯಾಸವಿಠಲ) ಇವರೆಲ್ಲ ತಮ್ಮ ತಮ್ಮ ಕೊಡುಗೆಗಳಿಂದ ದಾಸಸಾಹಿತ್ಯವನ್ನು ಶ್ರೀಮಂತಗೊಳಿಸಿದರು.

ಇವರಲ್ಲಿ ಗೋಪಾಲದಾಸರು (ಭಾಗಣ್ಣ) ವಿಜಯದಾಸರ ತಾತ್ವಿಕವಿಚಾರಧಾರೆಯನ್ನು ಮುಂದುವರಿಸಿದ್ದಲ್ಲದೇ ಸಂಗೀತ, ನರ್ತನ, ಚಿತ್ರಕಲೆಗಳನ್ನೂ ಬಳಸಿಕೊಂಡರು. ಗೋಪಾಲದಾಸರಿಂದ ಪ್ರಭಾವಿತರಾದ ಅವರ ತಮ್ಮಂದಿರಾದ ಸೀನಪ್ಪ (ವರದಗೋಪಾಲವಿಠಲ), ದಾಸಪ್ಪ (ಗುರುಗೋಪಾಲವಿಠಲ), ರಂಗಪ್ಪ (ತಂದೆಗೋಪಾಲವಿಠಲ) ಮತ್ತು ಶಿಷ್ಯ ಐಜಿ ವೆಂಕಟರಾಮಾಚಾರ್ಯ (ವಾಸುದೇವವಿಠಲ) ಅವರೂ ಸಹ ತಮ್ಮನ್ನು ಸಾಹಿತ್ಯಸೇವೆಯಲ್ಲಿ ತೊಡಗಿಸಿಕೊಂಡರು.

ಗೋಪಾಲದಾಸರ ಹೆಸರನ್ನು, ಪರಂಪರೆಯನ್ನು ಉಳಿಸಿದವರಲ್ಲಿ ಜಗನ್ನಾಥದಾಸರು (ಜಗನ್ನಾಥವಿಠಲ) ಪ್ರಮುಖರು. ದಾಸಸಾಹಿತ್ಯ ಪ್ರಕಾರಗಳನ್ನಲ್ಲದೆ ಕನ್ನಡದಲ್ಲಿ ದೊಡ್ಡ ಗ್ರಂಥಗಳನ್ನೂ ರಚಿಸಿದ್ದಾರೆ.

ಅಲ್ಲಿಂದ ಮುಂದೆ, ಹರಿದಾಸಪರಂಪರೆ ಸಾಗಿಬಂದ ದಾಸಪರಂಪರೆಯಲ್ಲಿ ಅನೇಕರು ತಮ್ಮ ಸೇವೆ ಸಲ್ಲಿಸಿದ್ದಾರೆ, ಅವರಲ್ಲಿ ಪ್ರಾಣೇಶದಾಸರು (ಪ್ರಾಣೇಶವಿಠಲ) ಮತ್ತು ಅವರ ಶಿಷ್ಯರ ಪರಂಪರೆಯನ್ನು ಜೀವಂತವಾಗಿಟ್ಟಿರುವ ಅನೇಕ ಹರಿದಾಸರಿದ್ದಾರೆ - ಎಮ್ ಆರ್ ಗೋವಿಂದರಾವ್ (ಗುರುಗವಿಂದವಿಠಲ), ಆರ್ ರಾಮಚಂದ್ರರಾಯರು (ತಂದೆವೆಂಕಟೇಶವಿಠಲ), ಕೋಸಗಿ ಸ್ವಾಮಿರಾಮಾಚಾರ್ಯ (ಶ್ರೀಗುರುಜಗನ್ನಾಥವಿಠಲ), ವಕೀಲ ಸ್ವಾಮಿರಾಯರು (ವರದೇಶವಿಠಲ), ಜೋಳದಹೆಡಗಿ ಶೇಖ್ ಬಡೇಸಾಬ್ (ರಾಮದಾಸ), ವಕೀಲ ಜಿ ಮಧ್ವರಾವ್ (ಮಧ್ವಮುನಿ), ಹೇರೂರು ರಾಮರಾಯರು (ಮೂಲರಾಮ), ಗುರುರಾಜ ಬೆಣಕಲ್ (ನರಹರಿ) ಮತ್ತಿನ್ನೂ ಅನೇಕರನ್ನು ನಾವು ನೆನೆಯಬಹುದು.
ದಾಸಸಾಹಿತ್ಯದಲ್ಲಿ ಮಹಿಳೆಯರು:
ದೈನಂದಿನ ಕಾರ್ಯಕಲಾಪದೊಂದಿಗೆ ದಾಸರ ರಚನೆಗಳನ್ನು ಹಾಡಿಕೊಂಡು ಉಳಿಸಿಕೊಂಡು ಬಂದಿರುವಂತೆಯೇ, ದಾಸಸಾಹಿತ್ಯದ ರಚನೆಯಲ್ಲೂ ಮಹಿಳೆಯರ ಗಮನಾರ್ಹ ಪಾತ್ರವಿದೆ.
ಮೊದಲ ಘಟ್ಟದಲ್ಲಿ ಪುರಂದರ ದಾಸರ ಹೆಂಡತಿ ಸರಸ್ವತೀಬಾಯಿ (ಸಿರಿಪುರಂದರವಿಠಲ) ಮತ್ತು ಮಗಳು ರುಕ್ಮಿಣೀಬಾಯಿ (ತಂದೆಪುರಂದರವಿಠಲ) ಕೃತಿರಚನೆ ಮಾಡಿದ್ದರೆನ್ನಲಾಗಿದ್ದರೂ, ಅವರ ಕೃತಿಗಳು ಈಗ ಉಪಲಬ್ಧವಿಲ್ಲ.

ದ್ವಿತೀಯ ಘಟ್ಟದಲ್ಲಿ ಶ್ರೀರಾಮೇಶ ಅಂಕಿತದೊಂದಿಗೆ ಮುಯ್ಯದ ಪದಗಳು, ಬೀಗರಹಾಡು, ಮೋರೆಗೆ ನೀರು ತಂದ ಹಾಡು ಇತ್ಯಾದಿ ಗಲಗಲಿ ಅವ್ವನವರ ಕೊಡುಗೆ. ಅವರ ಶಿಷ್ಯೆಯಾದ ಭಾಗಮ್ಮ ಅಥವಾ ಪ್ರಯಾಗವ್ವ ಕನ್ನಡದಲ್ಲಿ ಭಾಗವತದ 3ನೆಯ ಸ್ಕಂದ ಬರೆದರು.

ದಾಸಸಾಹಿತ್ಯಕ್ಕೆ ಸೇವೆ ಸಲ್ಲಿಸಿದ ಮಹಿಳೆಯರನ್ನು ನೆನೆಯುವಾಗ, ಹೆಳವನಕಟ್ಟೆ ರಂಗ ಅನ್ನುವ ಅಂಕಿತದಲ್ಲಿ ವಿಪುಲವಾಗಿ ಸಾಹಿತ್ಯಸೃಷ್ಟಿ ಮಾಡಿದ ಗೋಪಾಲದಾಸರ ಶಿಷ್ಯೆಯಾದ ಹೆಳವನಕಟ್ಟೆ ಗಿರಿಯಮ್ಮನವರನ್ನು ಮರೆಯುವ ಹಾಗೆಯೇ ಇಲ್ಲ.

ಭೀಮೇಶಕೃಷ್ಣ ಅಂಕಿತದೊಂದಿಗೆ ಅನೇಕ ರಚನೆಗಳನ್ನು ಮಾಡಿದ ಹರಪನಹಳ್ಳಿ ಭೀಮವ್ವನ ಸರಳ ಶೈಲಿಯ ಜನಪ್ರಿಯ. ಅನೇಕ ಪೌರಾಣಿಕ ಕಥೆಗಳನ್ನು ಸರಳಕನ್ನಡದ ಹಾಡುಗಳಾಗಿ ಪರಿವರ್ತಿಸಿದ ಕೀರ್ತಿ ಭೀಮವ್ವನಿಗೆ ಸಲ್ಲುತ್ತದೆ. ಶ್ರಾವಣ ಶುಕ್ರವಾರದ ಹಾಡು, ಶನಿವಾರದ ಹಾಡು ಇತ್ಯಾದಿ ಭೀಮವ್ವನ ಕೃತಿಗಳು ಶ್ರಾವಣಮಾಸದಲ್ಲಿ ಇಂದಿಗೂ ಹಾಡಲ್ಪಡುತ್ತವೆ.

ಈ ಪಟ್ಟಿಗೆ, ಚೆಲ್ಲಮ್ಮ, ಗಣಪಕ್ಕ, ಸುಂದರಾಬಾಯಿ, ಪನ್ನಿ ಲಕ್ಷ್ಮೀಬಾಯಿ, ಲಕ್ಷ್ಮೀದೇವಮ್ಮ ಮುಂತಾದವರೂ ಸೇರುತ್ತಾರೆ. ತಡವಾಗಿಯಾದರೂ ಸ್ವತಃ ಕೃತಿರಚನೆಗೆ ಕೈಹಾಕಿದ ಮಹಿಳೆಯರ ಕೊಡುಗೆಯಿಂದ ದಾಸಸಾಹಿತ್ಯದ ಹರವು, ಆಳ ಹೆಚ್ಚಿದವು ಎನ್ನುವುದರಲ್ಲಿ ಅತಿಶಯೋಕ್ತಿಯಿಲ್ಲ.

********************************

ಒಟ್ಟಿನಲ್ಲಿ ಕನ್ನಡ ಹರಿದಾಸ ಸಾಹಿತ್ಯವು ವಿಷಯ, ರೂಪ, ಭಾಷೆ, ಪರಿಣಾಮಗಳೆಲ್ಲದರಲ್ಲೂ ವೈಶಿಷ್ಟ್ಯತೆಯನ್ನು ಸಾಧಿಸಿ ಇಂದಿಗೂ ಜೀವಂತವಾಗಿದೆ ಎಂಬ ಮಾತನ್ನು ತಳ್ಳಿಹಾಕುವಂತಿಲ್ಲ. ಕರ್ನಾಟಕದ ಎಲ್ಲ ಭಾಗಗಳ ಮಹನೀಯರ ಕೊಡುಗೆ ಇದೆಯೆನ್ನುವುದು ಎಷ್ಟು ಸತ್ಯವೋ, ಅದರ ಸಿಂಹಪಾಲು ಕೃಷ್ಣೆ-ತುಂಗೆಯರ ತೀರದ ಪ್ರದೇಶಗಳದ್ದು ಅನ್ನುವುದೂ ಅಷ್ಟೇ ದಿಟ.

ಮೂಲ ಕೃತಿಯ ಲೇಖಕಿ: ಶ್ರೀಮತಿ ಸೀತಾ ಗುಡೂರ್-ಕುಲಕರ್ಣಿ
ಸಾರ ಇಳಿಸಿದವರು: ಲಕ್ಷ್ಮೀನಾರಾಯಣ ಗುಡೂರ್

********************************

ಬಾಸ್ವರ್ತ್ ಯುದ್ಧರಂಗ ಎನ್ನುವ ಇಂಗ್ಲೆಂಡಿನ ಪ್ರೇಕ್ಷಣೀಯ ಸ್ಥಳ -ಶ್ರೀವತ್ಸ ದೇಸಾಯಿ

ಒಂದು ರೀತಿಯಿಂದ ಇದು ಇಂಗ್ಲೆಂಡಿನ ದೊರೆ ಮೂರನೆಯ ರಿಚರ್ಡ್ ನ ಇತಿಹಾಸದ ಬಗ್ಗೆ ನಾನು ಬರೆದ ಲೇಖನದ (https://wp.me/p4jn5J-3Sw) ಹಿಂದೆ ಸರಿದ ಭಾಗ! ಅದರಲ್ಲಿ ಆತನ ಮರಣದ ನಂತರದ ಘಟನೆಗಳ ವಿಶ್ಲೇಷಣೆಯಿದ್ದರೆ ಇದರಲ್ಲಿ ಆತ ಸಾವನ್ನಪ್ಪಿದ ಜಾಗದ ಸ್ಥಳಪುರಾಣ ಇದೆ. ಅಲ್ಲಿ ನೋಡುವದೇನು ಇದೆ? ಇದೇ ಪ್ರಶ್ನೆಯನ್ನು ಸ್ಟೇನ್ಸ್ಟಪಕ್ಕದ ರನ್ನಿಮೀಡ್ ಬಗ್ಗೆಯೂ ಕೇಳಬಹುದು. ಅಲ್ಲಿ ಮ್ಯಾಗ್ನಾ ಕಾರ್ಟಾದ ಮೇಲೆ ಸಹಿ ಆಗಿತ್ತು. ಅಲ್ಲಿ ಇತಿಹಾಸವಿದೆ. ಇಂಥ ಐತಿಹಾಸಿಕ ಸ್ಥಳಗಳಲ್ಲೆಲ್ಲ ಅದರ ಹಿಂದಿನ ಐತಿಹಾಸಿಕ ಸಂಗತಿಗಳೇ ರೋಚಕ. ಇತಿಹಾಸ ಎದ್ದು ಬರುತ್ತದೆ; ವ್ಯಕ್ತಿಗಳು, ರಾಜರು ಜೀವ ತಳೆದು ಮಾತಾಡುತ್ತಾರೆ! ಒಂದು ವಿಷಯ: ನಾವು ಲ್ಯಾಂಕಾಸ್ಟರಿನ ಕೆಂಪು ಮತ್ತು ಯಾರ್ಕ್ ಶೈರಿನ ಬಿಳಿ ಗುಲಾಬಿ ಲಾಂಛನಗಳ ಬಗ್ಗೆ ಓದುತ್ತೇವೆ. ಆದರೆ ಅವುಗಳು ಆಗ ಲಾಂಛನವಾಗಿರಲಿಲ್ಲ. ಸೈನಿಕರು ಹೊತ್ತ ಬಿಳಿ ಬ್ಯಾಜಿನ ದಾಖಲೆ ಮಾತ್ರ ಇದೆ. ಶೇಕ್ಸ್ಪಿಯರನ ನಾಟಕದಲ್ಲಿ ಮತ್ತು ನಂತರದ ಹತ್ತೊಂಬತ್ತನೆಯ ಶತಮಾನದ ಬರವಣಿಗೆಗಳಲ್ಲಿ ಈ ಸಂಜ್ಞೆಗಳಿಗೆ ಪ್ರಚಾರ ಬಂದಿತು. -(ತತ್ಕಾಲ ಸಂ!)
king-richard-iii-
ಮೂರನೆಯ ರಿಚರ್ಡ್                             ಮೊದಲು ಸ್ವಲ್ಪ ಇತಿಹಾಸ

ಮೇಲಿನ ಮಾತುಗಳ ಅರ್ಥವಾಗಲು ಕೆಲವು ಐತಿಹಾಸಿಕ ವಿಷಯಗಳನ್ನು ಅರಿತುಕೊಳ್ಳಬೇಕಾಗುತ್ತದೆ. ಬಹಳಷ್ಟು ಜನರಿಗೆ  ಇಂಗ್ಲೆಂಡಿನ ಎರಡು ಎರಡು ಪ್ರಮುಖ ರಾಜವಂಶ ಪಂಗಡಗಳಾದ ಲ್ಯಾಂಕಾಸ್ಟರ್ ಮನೆತನ (ಲಾಂಛನ ಕೆಂಪು ಗುಲಾಬಿ) ಮತ್ತು ಯಾರ್ಕ್ ಮನೆತನಗಳ (ಬಿಳಿ ಗುಲಾಬಿ) ಮಧ್ಯೆ 30 ವರ್ಷಗಳ ಕಾಲ ನಡೆದ 15 ಯುದ್ಧಗಳ ಬಗ್ಗೆ (”ದ ಬ್ಯಾಟಲ್ ಆಫ್ ದಿ ರೋಸಸ್”) ಗೊತ್ತಿದ್ದರೂ ಅದು ಮುಕ್ತಾಯವಾದ ಬಾಸ್ವರ್ತ್ಎನ್ನುವ ಊರಿನ ಹತ್ತಿರದ ಈ ತಗ್ಗು, ದಿನ್ನೆ ಮತ್ತು ಚೌಗು ಪ್ರದೇಶದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿರಲಿಕ್ಕಿಲ್ಲ. ಧರ್ಮಕ್ಷೇತ್ರವಾದ ಕುರುಕ್ಷೇತ್ರದಲ್ಲಿ ಕಾದ ದಾಯಾದಿಗಳಾದ ಕೌರವ ಪಾಂಡವರಂತೆಯೇ ಇಂಗ್ಲೆಂಡಿನ ಕಿರೀಟಕ್ಕಾಗಿ ಹೋರಾಡಿದ ಈ ಎರಡೂ ಮನೆತನಗಳೂ 14 ನೆಯ ಶತಮಾನದಲ್ಲಿ ಆಳಿದ ಮೂರನೆಯ ಎಡ್ವರ್ಡ್ ಪ್ಲಾಂಟಾಂಜನೆಟ್ ದೊರೆಯ ಸಂತತಿಗಳೇ! ಅ ಕರಾಳ ದಿನ ಬೆಳಗಿನ ಸಮಯ (22ನೆಯ ಆಗಸ್ಟ್, 1485) ಬಾಸ್ವರ್ತ್ ಯುದ್ಧದಲ್ಲಿ ಮೂರನೆಯ ರಿಚರ್ಡ್ ಇಂಗ್ಲೆಂಡಿನ ಪಟ್ಟಕ್ಕಾಗಿ ಎದುರಾಳಿಯಾದ (ಮುಂದೆಏಳನೆಯ ಹೆನ್ರಿ ಎಂದು ಕರೆಯಲ್ಪಡಲಿರುವ)  ಹೆನ್ರಿ ಟ್ಯೂಡರ್ ನ ದಂಡಿನ ಮೇಲೆ ರಾಜ ಸ್ವತಃ ಏರಿ ಹೋದಾಗ ತಲೆಗೆ ವೈರಿಯ ಹ್ಯಾಲ್ಬರ್ಡ್ (halberd) ಎನ್ನುವ ಭೀಕರ ಶಸ್ತ್ರದ ಪ್ರಹಾರದಿಂದ ಮರಣಹೊಂದಿದ. ಆತನ ಕುದುರೆಯ ಕಾಲುಗಳು ಕೆಸರಿನಲ್ಲಿ ಸಿಕ್ಕಿಕೊಂಡಿದ್ದರಿಂದ ಕೆಳಗಿಳಿಯಬೇಕಾಗಿ ಅಲ್ಲಿಂದಲೆ ಧೈರ್ಯದಿಂದ ಮುನ್ನುಗ್ಗಿದ್ದ ರಿಚರ್ಡ್ ಯುದ್ಧರಂಗದಲ್ಲಿ ಮೃತನಾದ ಇಂಗ್ಲೆಂಡಿನ ಕೊನೆಯ ಅರಸನೂ ಆಗಿದ್ದಾನೆ. ಆತ ಆಳಿದ್ದು ಬರೀ ಹದಿನಾಲ್ಕು ವರ್ಷ ಮಾತ್ರ.

ಬಾಸ್ವರ್ತ್ ಯುದ್ಧರಂಗ

ನೆರಳು ಗಡಿಯಾರ (Sun dial with the crown of Richard III)

ಧರ್ಮಕ್ಷೇತ್ರೇ ಕುರುಕ್ಷೇತ್ರೇ!

ಆಗ ಪ್ರಾಟೆಸ್ಟೆಂಟ್ ಮತ ಹುಟ್ಟಿರಲಿಲ್ಲ. ರಿಚರ್ಡನ ಪೂರ್ವಜರಿಗೆ ಫ್ರಾನ್ಸ್ ದೇಶದ ಸಂಬಂಧವಿತ್ತು ಅಂತ ಆತನೂ ಕ್ಯಾಥಲಿಕ್ ಆಗಿದ್ದ. ಆತ ಮೃತನಾದ ಮೇಲೆ ಆತನ ದೇಹವನ್ನು ಹತ್ತಿರದ ಲೆಸ್ಟರಿನ ಫ್ರಾನ್ಸಿಸ್ಕನ್ ಫ್ರಯರಿ ಚರ್ಚಿನಲ್ಲಿ ಗಡಿಬಿಡಿಯಿಂದ ಮಣ್ಣು ಮಾಡಲಾಗಿತ್ತು. ಅದರ ಗುರುತುಗಳೆಲ್ಲ ಮಾಯವಾಗಿದ್ದವು. ಮುಂದೆ ಆ ಸ್ಥೂಲಕಾಯದ, ಷಟ್ಪತ್ನಿವ್ರತ (!) ಎಂಟನೆಯ ಹೆನ್ರಿ ಪೋಪನನ್ನು ಮಾನ್ಯ ಮಾಡದೆ ಪ್ರಾಟೆಸ್ಟೆಂಟ್ ಆದ. ಆತ ಫ್ರಯರಿಗಳನ್ನು (Friary) ರದ್ದುಗೊಳಿಸಿದ. ಸೋರ್ ನದಿಯಲ್ಲಿ ರಿಚರ್ಡನ ಅಸ್ಥಿಯನ್ನು ಚೆಲ್ಲಲಾಯಿತೆಂದೆಲ್ಲ ವದಂತಿ ಹಬ್ಬಿತ್ತು. ಅದಕ್ಕೆ ಅದನ್ನು ಪತ್ತೆ ಹಚ್ಚಲು ಐದು ಶತಮಾನಗಳೇ ಬೇಕಾಯಿತು. ಆತನ ನಿಷ್ಟ ಅಭಿಮಾನಿಗಳ ಪ್ರಯತ್ನದಿಂದ ಸಂಶೋಧನೆ ಪ್ರಾರಂಭವಾಗಿ ಆ ಚರ್ಚಿನ ಗುರುತು ಹಿಡಿದು ಕಾರ್ ರ್ಪಾರ್ಕಿನಡಿ ಉತ್ಖನನ ಮಾಡಿ ರಿಚರ್ಡನನ್ನು ವಿಜೃಂಭ್ಹಣೆಯಿಂದ ಲೆಸ್ಟರ್ ಕೆಥಿಡ್ರಲ್ನಲ್ಲಿ ಸಮಾಧಿ ಮಾಡಿದ್ದು ಕ್ಯಾಥಲಿಕ್ ಮತದ ಕ್ರಿಶ್ಚಿಯನ್ನರಿಗೆ ಅಸಮಾಧಾನವಾಗಿತ್ತು! 

ಕೊನೆಯುಸಿರೆಳೆದವರೆಷ್ಟು ಜನ?

ಹಾಗೆ ನೋಡಿದರೆ ಒಂದು ಸಾವಿರ ಜನ ಮೃತರಾದರೂ, ಎರಡೂ ಕಡೆ ಸೇರಿ ಪಾಲುಗೊಂಡ 22,000 ಯೋಧರ ಸಂಖ್ಯೆ ಕುರುಕ್ಷೇತ್ರದ ಹದಿನೆಂಟು ಅಕ್ಷೌಹಿಣಿ ಸೈನ್ಯಕ್ಕೆ ಹೋಲಿಸಲಾಗದು. ಅದರಲ್ಲಿ ಎರಡುಸಾವಿರ ಯೋಧರು ಫ್ರಾನ್ಸಿನಿಂದ ಬಂದ ಕೂಲಿ ಸೈನಿಕರು (mercenaries). ಈ ದೇಶದ ಅತ್ಯಂತ ಭೀಕರವಾದ ಯಾದವೀ ಕಾಳಗವೆಂದು ಪ್ರಸಿದ್ಧವಾದ ಐವತ್ತು ಸಾವಿರ ಜನ ಭಾಗವಹಿಸಿದ್ದ ಟೌಟನ್ ಯುದ್ಧಕ್ಕೆ ಸಮ ಇದು ಆಗಿರಲಿಲ್ಲ. ಆದರೂ ಇದು ಈ ದೇಶದ ಇತಿಹಾಸಕ್ಕೆ ಅತ್ಯಂತ ಮಹತ್ವದ ತಿರುವು ಕೊಟ್ಟಿತ್ತು. ರಿಚರ್ಡನ ಪತನದಿಂದ ಇಂಗ್ಲೆಂಡಿನ ದೊರೆಯಾದ ಏಳನೆಯ ಹೆನ್ರಿ ಯಾರ್ಕ್ ಮಹಿಳೆಯನ್ನು ಮದುವೆಯಾಗಿ ಎರಡೂ ಪಂಗಡಗಳನ್ನು ಒಂದುಗೂಡಿಸಿದ. ಆತನ ಲಾಂಛನವೇ ಮುಂದೆ ಬಿಳಿ-ಕೆಂಪು ಎರಡೂ ಬಣ್ಣದ ಹೂಗಳೊಂದಿಗೆ ಟ್ಯೂಡರ್ ರೋಸ್ ಆಯಿತು.

ರಿಚರ್ಡನ ಕೊನೆಯ ಮಾತುಗಳು

ಬಾಸ್ವರ್ತ್ ರಣರಂಗದ ಸುತ್ತಲೂ ನಡೆದಾಡಲು ಅನುಕೂಲವಾಗುವ ಪಥ ಅದೆ. ಅಲ್ಲಲ್ಲಿ ಉತ್ತಮ ಮಾಹಿತಿ ಫಲಕಗಳನ್ನು ನಿರ್ಮಿಸಿದ್ದರಿಂದ 500 ವರ್ಷಗಳ ಹಿಂದಿನ ಇತಿಹಾಸ ಜೀವ ತಳೆದು ಸಮರ ಇದುರಿಗೇ ನಡೆಯುತ್ತಿದೆಯೇನೋ ಅಂತ ರೋಮಾಂಚನವಾಗುತ್ತದೆ. ಕುದುರೆಗಳ ಖುರಪುಟ, ಕತ್ತಿ ಗುರಾಣಿಗಳ ಘರ್ಷಣೆಯ ಖಟ್ – ಖಡಲ್, ಮರಣವನ್ನಪ್ಪುತ್ತಿರುವ, ಗಾಯಗೊಂಡ ಸೈನಿಕರ ಆರ್ತ ನಾದ, ಕಿವಿಯನ್ನು ಗಡಚಿಕ್ಕುತ್ತವೆ. ಇಂಥ ಕಾಳಗಗಳಲ್ಲಿ ಕುದುರೆ ಸವಾರರದೇ ಮೇಲುಗೈಯೆಂದ ಮೇಲೆ ಕುದುರೆಯನ್ನು ಕಳೆದುಕೊಂಡು ಕುದುರೆಯಿಂದ ಕೆಳಕ್ಕುರುಳಿದ ರಿಚರ್ಡ್ ದೊರೆ ’ಒಂದು ಕುದುರೆಗಾಗಿ ಏನನ್ನು (ನನ್ನ ರಾಜ್ಯವನ್ನೂ) ಕೊಡಲಾರೆ” ಅಂದನಂತೆ. ಆತನ ಕಿರೀಟ ಹಾರಿತ್ತು ಎದುರಾಳಿಗಳ ಭರ್ಚಿ-ಕೊಡಲಿ ಕೂಡಿದ ಹ್ಯಾಲ್ಬರ್ಡ್ ಶಸ್ತ್ರದಿಂದ ಭೀಕರ ಹತ್ಯೆಯಾಯಿತು..ಶೇಕ್ಸ್ಪಿಯರನ ನಾಟಕದ ಪ್ರಸಿದ್ಧ ಸಾಲುಗಳ ಪ್ರಕಾರ “A horse, a horse, My kingdom for a horse” ಅಂತ ಕನವರಿಸುತ್ತ ಮಡಿದನಂತೆ

ರಾಜನ ಕೊನೆಯ ನೀರಿನ ಗುಟುಕು?

ಬಾಸ್ವರ್ತ್ ರಣಭೂಮಿಯ ಸುತ್ತಿನ ದಾರಿಯ ಹದಿನೇಳನೆಯ ಮತ್ತು ಕೊನೆಯ ವೀಕ್ಷಣಾ ಸ್ಥಾನದಲ್ಲಿ ಹತ್ತೊಂಬತ್ತನೆ ಶತಮಾನದಲ್ಲಿ ಊರ್ಜಿತವಾದ ಒಂದು ಕಲ್ಲುಗುಡ್ಡೆ (Cairn) ಇದೆ. ಅದು ಅಲ್ಲಿ ಹರಿವ ನೀರಿನ ಸೆಲೆಯ ಮೇಲೆ ಕಟ್ಟಲಾಗಿದೆ ಅನ್ನುತ್ತದೆ ಒಂದು ಫಲಕ. ಅದರ ಪಕ್ಕದಲ್ಲೇ ರಿಚರ್ಡನ ಸೈನ್ಯಯುದ್ಧ ಪೂರ್ವ ’ಡೇರೆ’ ಹಾಕಿತ್ತು. ಅಲ್ಲಿಯೇ ಆತ ಕೊನೆಯ ಬಾರಿ ನೀರು ಕುಡಿದನೆಂದು ಪ್ರತೀತಿ. ಆ ಸ್ಥಳವನ್ನು ಇಂದಿಗೂ ನೋಡಿ ನಿಮ್ಮ ಇತಿಹಾಸ ಪಿಪಾಸೆಯನ್ನು ತಣಿಸಿಕೊಳ್ಳಬಹುದು.

ಕೊನೆಗೂ ವಿಜ್ಞಾನದ ತೀರ್ಪು

ಯುದ್ಧದ ನಾಮೋ ನಿಶಾನೆ ಎಲ್ಲ ಅಳಿಸಿ ಹೋಗಿರುವಾಗ ಈ ಜಾಗದಲ್ಲೇ ಆ ರಣರಂಗವಿತ್ತು ಅಂತ ಹೇಗೆ ಸಾಬೀತು ಮಾಡಲಾಯಿತು? ಅದಕ್ಕೆ ಸಹಾಯ ಬಂದುದು ಆಧುನಿಕ ಕಾರ್ಬನ್ ಡೇಟಿಂಗ್ ವಿಜ್ಞಾನ. ಈ ದೇಶದಲ್ಲಿ ಅತ್ಯಂತ ಹಳೆಯ ಚರ್ಚುಗಳಲ್ಲೂ ಉಳಿದಿರುವ ದಾಖಲೆಗಳು ಇತಿಹಾಸವನ್ನು ಜೋಡಿಸಲು ಬಹಳ ಸಹಾಯ ಮಾಡುತ್ತವೆ. ಹುಟ್ಟು, ಬಾಪ್ಟಿಸಮ್ (ನಾಮಕರಣ), ಮದುವೆ, ಶವಸಂಸ್ಕಾರದ ದಾಖಲೆಗಳನ್ನು ಮುತವರ್ಜಿಯಿಂದ ಕಾದಿಡಲಾಗುತ್ತದೆ. ಪಕ್ಕದ ಡಾಡ್ಲಿಂಗ್ಟನ್ ಚರ್ಚಿನ ಶವಸಂಸ್ಕಾರ ದಾಖಲೆಗಳಿಂದ ಇತಿಹಾಸದ ತುಣುಕುಗಳನ್ನು ಜೋಡಿಸಿದ ಮೇಲೆಯೂ ಉಳಿದಿರಬಹುದಾದ ಸಂಶಯಗಳನ್ನು ನಿವಾರಿಸಲು ಆಧುನಿಕ ವಿಜ್ಞಾನ ಸಹಾಯಕ್ಕೆ ಬಂದಿದೆ. ಶತಮಾನಗಳ ಹಿಂದೆ ಲೆಸ್ಟರಿನ ಮಧ್ಯೆ ನೆಲಸಮವಾಗಿ ಹೂತುಹೋದ ಫ್ರಯರಿ ಚರ್ಚಿನಲ್ಲಿ ಸಿಕ್ಕ ಎಲುಬುಗಳು ರಿಚರ್ಡ್ ದೊರೆಯದೇ ಅಂತ ಹಲ್ಲಿನ ಡಿ ಎನ್ ಏ ಸಾಬೀತು ಮಾಡಿದಂತೆ ಬಾಸ್ವರ್ತ್ ಹತ್ತಿರದ ಆಳದ ಮಣ್ಣಿನ ಪೀಟ್ (peat) ಸ್ಯಾಂಪಲ್ಲುಗಳನ್ನು ಕಾರ್ಬನ್ ಡೇಟಿಂಗ್ ಮಾಡಿ ಪರೀಕ್ಷಿಸಿದ ಅಮೇರಿಕೆಯ ಲ್ಯಾಬೋರಟರಿ ಐದು ನೂರು ವರ್ಷಗಳ ಹಿಂದೆ ಇಲ್ಲಿರುವುದೇ ಜವುಳು ಪ್ರದೇಶ (marshland) ಅಂತ ಖಚಿತಪಡಿಸಿತು. ಅದರಿಂದ ರಣರಂಗದ ಸರಿಯಾದ ಜಾಗ ಇದು ಅಂತ ನಿಶ್ಚಿತವಾಯಿತು.ಇವೆಲ್ಲ ಮಾಹಿತಿ ಪಕ್ಕದಲ್ಲಿರುವ ವಿಸಿಟರ್ ಸೆಂಟರ್ ನಲ್ಲಿರುವ ಉತ್ತಮ ಮ್ಯೂಸಿಯಮ್ ದಲ್ಲಿ ದೊರಕುತ್ತವೆ.

ಕೊನೆಯ ಮಾತು

ಇತಿಹಾಸದಿಂದ ಏನು ಉಪಯೋಗ ಎಂದು ಅನೇಕರ ಅಭಿಪ್ರಾಯವಾದರೂ ಜಾರ್ಜ್ ಸಾಂಟಾಯನ ಹೇಳಿದಂತೆ ಇತಿಹಾಸವನ್ನರಿಯದವರು ಮತ್ತೆ ಮತ್ತೆ ಅವೇ ತಪ್ಪುಗಳನ್ನು ಮಾಡುವ ಶಾಪಗ್ರಸ್ತರಾಗುತ್ತಾರೆ! ಇತಿಹಾಸವನ್ನು ತುಳಿದರೆ ಅದು ನಿನ್ನನ್ನು ನೆಲಸಮಮಾಡುತ್ತದೆ! ಆದರೆ ಮಾನವ ಇತಿಹಾಸದ ತುಂಬೆಲ್ಲ ಈರ್ಷೆ, ದ್ವೇಷಗಳಿಂದ ಯುದ್ಧಗಳಾಗುತ್ತಿರುವಾಗ ಅತ್ಯಂತ ಪುರಾತನ ಉಪನಿಷತ್ತಿನ ವಾಕ್ಯ ’ಮಾ ವಿದ್ವಿಷಾವಹೈ’ (ವೈಮನಸ್ಸು, ದ್ವೇಷ ಬೇಡ) ಯನ್ನು ಯಾರೂ ಕೇಳಿಸಿಕೊಂಡಿಲ್ಲವೇ? ಎಂದೆನಿಸುತ್ತದೆ

ಶ್ರೀವತ್ಸ ದೇಸಾಯಿ.

(ಈ ವಾರದ ಕನ್ನಡಪ್ರಭದಲ್ಲಿಯ ನನ್ನ ಲೇಖನದ ವಿಸ್ತೃತ ಆವೃತ್ತಿ)

ಫೋಟೋಗಳು: ಲೇಖಕರವು; Photo of Peat: CC BY-SA 3.0, https://commons.wikimedia.org/w/index.php?curid=244694

Links: My article: https://wp.me/p4jn5J-3Sw

https://www.bosworthbattlefield.org.uk/