ವರಮನೋಹರೆ ಕೇಳು ಪಾರಿಜಾತವಿದು – ಯೋಗೀಂದ್ರ ಮರವಂತೆ

ಆಶ್ವೀಜ ಮಾಸದ ಸಂಜೆಯ ಹೊತ್ತಿಗೆ ಮರವಂತೆ ಮನೆಯ ಹೊರಗೆ ಯಾರದೋ  ಕಾಲ ಸದ್ದು ಕೇಳಿದರೂ ಇವರೇ ಬಂದರೇನೋ ಎಂದು ರೋಮಾಂಚನಗೊಳ್ಳುವುದು; ಬಗಲಿಗೆ ಮದ್ದಳೆ, ಹಾರ್ಮೋನಿಯಂ ಧರಿಸಿದ ಗುಂಪು , ಕೈಯಲ್ಲಿ ಅಲಂಕಾರಗೊಂಡ ಪುಟ್ಟ ಕೋಲನ್ನು ಹಿಡಿದ ಇಬ್ಬರು ಮಕ್ಕಳನ್ನು ಕೂಡಿಕೊಂಡು  ಮನೆಯ ಗೇಟು ದೂಡಿಕೊಂಡು ಯಾವಾಗ ಒಳಬರುತ್ತಾರೆ ಎಂದು ಕಾಯುವುದು. ನಮ್ಮಮನೆಗೆ ಬರುವ ಮೊದಲು ಮದ್ದಳೆಯ ‘ತೋಂ ತೋಂ’ ನೆರೆಮನೆಯಲ್ಲಿ ಕೇಳುವಾಗ, ಇನ್ನೊಂದು ಅರ್ಧ ಘಂಟೆಯಲ್ಲಿ ಇವರು ನಮ್ಮ ಮನೆಗೂ ಬರುತ್ತಾರಲ್ಲ ಎಂಬ ಖುಷಿಯಲ್ಲಿ ನಿಂತಲ್ಲಿ ನಿಲ್ಲಲಾಗದೆ , ಬಾಗಿಲ ಅಡ್ಡ ನಿಂತು ಎರಡು ತೈ ತೈ ಹೆಜ್ಜೆ ಹಾಕುವುದು.  ಕೇರಿಯ ಮಕ್ಕಳಿಗೆ ನವರಾತ್ರಿ ಎಂದರೆ  ಪ್ರತೀಕ್ಷೆಯಾದ ನನ್ನ ಬಾಲ್ಯ ಕಾಲದ  ನೆನಪುಗಳಿವು. ನರಸಿಂಹದಾಸರ ತಂಡದ ಹರಿದ ಚಪ್ಪಲಿಗಳ ಚರಪರ ಸದ್ದು, ಇನ್ನೊಂದು ಮನೆಯಲ್ಲಿ ಹಾಡಲು ಸಿದ್ಧ ಆಗುತ್ತಿರುವಾಗ ಅವರ ಹೊಟ್ಟೆಯಿಂದ ಗಂಟಲವರೆಗೆ ತುಂಬಿಕೊಂಡು ಹೊರಬರುವ ಕೆಮ್ಮು , ನಮ್ಮ ಮನೆಯ ಆವರಣದ  ಒಳಗೆ ಕೇಳಿಸಿತೆಂದರೆ ಮೈಯೆಲ್ಲಾ ಕಿವಿಯಾಗಿ , ಮನಸೆಲ್ಲ ಖಾಲಿಯಾಗಿ ನಾವು ತಯಾರು.

“ಗುರುದೈವ ಗಣಪತಿಗೆ ಶರಣು ಶರಣೆಂದು ” ಎನ್ನುತ್ತಾನೆ ಕುಳಿತ ಒಬ್ಬ ಹುಡುಗ
“ಲೇಸಾಗಿ ಹರಸಿದರು ಬಾಲಕರು ಬಂದು …” ಎಂದು ಮೊದಲಿನವನ ಎದುರು ಕುಳಿತ ಇನ್ನೊಬ್ಬ ಹುಡುಗ .

ಬಿಳಿ ಟೊಪ್ಪಿ, ಬಿಳಿ ವಸ್ತ್ರ  ಧರಿಸಿ, ಬೆಂಡು ಬಣ್ಣದ ಕಾಗದಗಳಿಂದ ಅಲಂಕಾರಗೊಂಡ ಹೂವಿನ ಕೋಲನ್ನು ಹಿಡಿದು ಎದುರು ಬದುರು ಕುಳಿತ ಮಕ್ಕಳಿಬ್ಬರು ಸವಾಲು ಜವಾಬುಗಳ ಧಾಟಿಯಲ್ಲಿ ಹೇಳುವ ಚೌಪದಿಯ  ಸಾಲುಗಳವು. ಅದು ಮುಗಿಯುವ ಹೊತ್ತಿಗೆ, ಮಕ್ಕಳ ಹತ್ತಿರದಲ್ಲಿ ಕುಳಿತ ನರಸಿಂಹದಾಸರು ಶ್ರುತಿ ಮೀಟುವವನ ಕಡೆಗೊಮ್ಮೆ , ಮದ್ದಲೆಗಾರನ ಕಡೆಗೊಮ್ಮೆ ಓರೆ ನೋಟ ಬೀರಿ , ಗತ್ತಿನಲ್ಲಿ ಹಾಡು ಆರಂಭಿಸುತ್ತಾರೆ ….

” ವಹ್ಹವ್ವಾರೆ ನೋಡಿರೋ ಈ ಕಡೆಯ
ಬಹ ನಾರಿ ಯಾರ್ ಇವಳು ನೀವ್ ಪೇಳಿರಯ್ಯ ,
ಉಡುಗಳ ಮಧ್ಯದಿ ಶಶಿಯಂತೆ
ಸ್ತ್ರೀಯರ ನಡುವೆ ದಂಡಿಗೆ ಏರಿ ಮಿಂಚಿನಂತೆ “

ಉದ್ಯಾನವದಲ್ಲಿ ಸಖಿಯರೊಂದಿಗೆ ತಿರುಗುತ್ತಿರುವ ಚಂದ್ರಾವಳಿಯನ್ನು ಮರೆಯಲ್ಲಿ ನಿಂತು ನೋಡಿದ ಕೃಷ್ಣ ,ಗೆಳೆಯರೊಂದಿಗೆ ಆಡುವ ಮಾತುಗಳಿವು. ಅವಳ ಸೌಂದರ್ಯಕ್ಕೆ ಸೋತವನು, ನಂತರ ಧೈರ್ಯ ಮಾಡಿ ಚಂದ್ರಾವಳಿಯ ಎದುರಿಗೇ ಬಂದು ನಿಂತು, ಅಳುಕು, ಭಂಡತನ, ಪ್ರೀತಿ, ಸೇರಿದ ಭಾವದಲ್ಲಿ ತನಗುಂಟಾಗಿರುವ ಪ್ರೇಮವನ್ನು ತಿಳಿಸುತ್ತಾನೆ. “ಭಳಿರೆ ಚಂದ್ರಾವಳಿ ನಿನ್ನನು ಕಾಣದೆ ಕಳವಳಿಸಿದೆ ಮನವು ….” ಎಂದು ಆ ಸಂದರ್ಭಕ್ಕೆ ಭಾಗವತರು ಹಾಡುತ್ತಾರೆ. ಕೃಷ್ಣ ಮತ್ತು ಚಂದ್ರಾವಳಿಯರ ಪಾತ್ರವಾಗಿರುವ ಮಕ್ಕಳು ಹಾಡುಗಳಿಗೆ ಅನುಗುಣವಾಗಿ  ಸಂಭಾಷಿಸುತ್ತಾರೆ.  ರಾಧೆಯ ತಂಗಿ ಚಂದ್ರಾವಳಿಯನ್ನು, ಕೃಷ್ಣನು ಕಾಡುವ ಶೃಂಗಾರಭರಿತ ಸನ್ನಿವೇಶ ಇರುವ  “ಚಂದ್ರಾವಳಿ ವಿಲಾಸ”  ಪ್ರಸಂಗದ ಕಥೆ ಹೀಗೆ “ಹೂವಿನ ಕೋಲು” ಎಂದು ಕರೆಯಲ್ಪಡುವ ಯಕ್ಷಗಾನದೊಳಗಿನ ಸಣ್ಣ ಪ್ರಕಾರದ ಮೂಲಕ ಮುಂದುವರಿಯುತ್ತದೆ. ಯಕ್ಷಗಾನ ತಾಳಮದ್ದಳೆಯಲ್ಲಿ ಕಾಣುವಂತಹ  ಕಥಾ ವಿಸ್ತಾರ, ಪಾತ್ರ ಚಿತ್ರಣ, ಪಾಂಡಿತ್ಯ, ಜಿಜ್ಞಾಸೆ, ವಿಮರ್ಶೆಗಳಿಗೆ  “ಹೂವಿನ ಕೋಲು” ಹೋಲಿಕೆ ಅಲ್ಲದಿದ್ದರೂ ವೇಷವನ್ನು ಧರಿಸದೇ ಎದುರು ಬದುರು ಕುಳಿತು, ಭಾಗವತರ ಹಾಡನ್ನು ಹೊಂದಿಕೊಂಡು ಪಾತ್ರಗಳಾಗಿ ಮಾತನಾಡುವ ಕಾರಣಕ್ಕೆ ತಾಳಮದ್ದಲೆಯನ್ನು ಈ ಪ್ರಕಾರ ನೆನಪಿಸುತ್ತದೆ.  “ಹೂವಿನ ಕೋಲು” ಸಂಪ್ರದಾಯದಲ್ಲಿ, ಯಕ್ಷಗಾನ ಪ್ರಸಂಗಗಳ ಸಣ್ಣ
ತುಣುಕುಗಳನ್ನು ಆಯ್ದು, ಚಿಕ್ಕ ಮಕ್ಕಳನ್ನು ತರಬೇತುಗೊಳಿಸುತ್ತಾರೆ. ಅವರನ್ನು ಕರೆದುಕೊಂಡು ನವರಾತ್ರಿಯ ಸಮಯದಲ್ಲಿ ಊರೆಲ್ಲ ತಿರುಗುತ್ತಾರೆ. ಪಾರಿತೋಷಕವಾಗಿ ಹಣ ತೆಂಗಿನಕಾಯಿ ಅಕ್ಕಿಯನ್ನು  ಪಡೆಯುತ್ತಾರೆ.

ನರಸಿಂಹದಾಸರು ಯಕ್ಷಗಾನ ಮೇಳಗಳಲ್ಲಿ ಹಾಡುವುದು ದುರಾದೃಷ್ಟವಶಾತ್ ನಿಲ್ಲಿಸಿದ ಮೇಲೆ, ನವರಾತ್ರಿಗೆ ಹೂವಿನಕೊಲಿನ ತಂಡ ಕಟ್ಟಿಕೊಂಡು ತಿರುಗುತ್ತಿದ್ದರು. ಹಾಗಾಗಿಯೇ ನರಸಿಂಹ ದಾಸರ ನೆನಪಾದಾಗಲೆಲ್ಲ ನವರಾತ್ರಿಯಲ್ಲಿ ಅವರು ಮನೆಗೆ ಬರುತ್ತಿದ್ದ ದಿನಗಳ
ನೆನಪಾಗುತ್ತದೆ.  ಒಂದು ಕಾಲಕ್ಕೆ ಯಕ್ಷಗಾನದ ತೆಂಕು ಬಡಗು ತಿಟ್ಟುಗಳ ಅಪೂರ್ವಸಿದ್ಧಿಯೊಂದಿಗೆ ಅಪ್ರತಿಮ ಭಾಗವತರೆನಿಸಿಕೊಂಡಿದ್ದ (ಯಕ್ಷಗಾನ ಹಾಡುಗಾರ ಮತ್ತು ಸೂತ್ರಧಾರ)  ನರಸಿಂಹದಾಸರು ಬದುಕಿನ ಕೊನೆಯ ಮೂವತ್ತು ವರ್ಷಗಳಲ್ಲಿ ಯಕ್ಷಗಾನದೊಟ್ಟಿಗೆ
ನಿರಂತರ ಸಂಬಂಧ ಇಟ್ಟುಕೊಂಡದ್ದು ನವರಾತ್ರಿಯ ಹೂವಿನಕೋಲಿನ ಮೂಲಕ ಮಾತ್ರ. ನರಸಿಂಹದಾಸರು ಕಲಾಸಂಪನ್ನತೆಯ  ಉತ್ತುಂಗದ ದಿನಗಳಲ್ಲಿ ಇರುವಾಗಲೇ ತಮ್ಮ ಅತ್ಯಮೂಲ್ಯವಾದ ಧ್ವನಿಯನ್ನು ಕಳೆದು ಕೊಂಡವರು. ಇಂದಿಗೆ ಸುಮಾರು 70 ವರ್ಷಗಳ ಹಿಂದೆ,
ಧ್ವನಿವರ್ಧಕಗಳು ಇಲ್ಲದ ಕಾಲದ ರಾತ್ರಿ ಬೆಳಗಿನವರೆಗೆ ಯಕ್ಷಗಾನ. ಇನ್ನು ಎರಡು ಮೇಳಗಳು ಜಿದ್ದಿನಲ್ಲಿ ಪ್ರದರ್ಶಿಸುವ ಜೋಡಾಟಗಳಲ್ಲಂತೂ ಎದುರಿನ ಮೇಳದ ಸದ್ದನ್ನು ಅಡಗಿಸಿ ದೂರದೂರದವರೆಗೆ ತನ್ನ ಕಂಠವನ್ನು ಮುಟ್ಟಿಸ ಬೇಕಾದ ಅನಿವಾರ್ಯತೆ, ಅವರ ಅತ್ಯಂತ ಬೇಡಿಕೆಯ ದಿನಗಳಾದ್ದರಿಂದ ಅವಿರತ ತಿರುಗಾಟ. ಮತ್ತೆ ಆಟ ಮುಗಿದ ಮೇಲೆ ಬೆಳಿಗ್ಗೆ ನಿದ್ರೆ ಮಾಡುವ ಗೋಜಿಗೆ ಹೋಗದೆ ಅನಾರೋಗ್ಯದ ದಿನಗಳನ್ನು ಹತ್ತಿರ ತರುವಂತಹ ಕಾಲಹರಣದ ಮಾಧ್ಯಮಗಳ ಸಹವಾಸ, ತನ್ನ ಪ್ರತಿಭೆಯ ಬಗ್ಗೆ ಅವರಿಗೇ  ಇದ್ದ ನಿರ್ಲಕ್ಷ್ಯ ಅಸಡ್ಡೆ … ಇಂತಹ ದಿನಚರಿ-ದುಡಿತದಲ್ಲಿ ನರಸಿಂಹದಾಸರ ಸುಸ್ವರ ಅನಿರೀಕ್ಷಿತವಾಗಿ ಬಿದ್ದುಹೋಯಿತು. ಮಾತನಾಡಿದರೂ ಕ್ಷೀಣವಾಗಿ ಕೇಳಿಸುವಂತಹ ಭಗ್ನ ಸ್ವರೂಪಕ್ಕೆ
ಮಾರ್ಪಾಟಾಯಿತು. ಇಂತಹ  ಆಕಸ್ಮಿಕ ಸನ್ನಿವೇಶದಲ್ಲಿ ಮೇಳಗಳ ತಿರುಗಾಟದಿಂದ ಅವರು ಹೊರಬರಬೇಕಾಯಿತು .

ಮರವಂತೆ ನರಸಿಂಹದಾಸರು, ಯಕ್ಷಗಾನ ವಲಯದಲ್ಲಿ ಕರೆಯಲ್ಪಡುತ್ತಿದ್ದುದು ದಾಸ ಭಾಗವತರೆಂದು. 1955-70 ರ ನಡುವೆ ದಾಸಭಾಗವತರು ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪ್ರಮುಖ ಯಕ್ಷಗಾನ ಮೇಳಗಳಲ್ಲಿ ಮುಖ್ಯ ಭಾಗವತರಾಗಿ
ಅಲ್ಲದಿದ್ದರೆ ಅತಿಥಿ ಕಲಾವಿದರಾಗಿ ಭಾಗವಹಿಸುತ್ತಿದ್ದರು. ಆಗ ದಾಸಭಾಗವತರ ಆಟ ಎಂದರೆ ಜನರು ದುಂಬಾಲು ಬೀಳುತ್ತಿದ್ದರಂತೆ. ಸಾರಿಗೆ ಸಂಪರ್ಕ ಸುಸೂತ್ರ ಇಲ್ಲದ ಕಾಲದಲ್ಲಿ, ಕಾರು ಮಾಡಿಕೊಂಡಾದರೂ ಅವರ ಆಟ ನೋಡಿ ಬರುತ್ತಿದ್ದವರ ದೊಡ್ಡ ಸಂಖ್ಯೆ ಇತ್ತಂತೆ. ತೆಂಕು ಮತ್ತು ಬಡಗು ತಿಟ್ಟುಗಳಲ್ಲಿ ಅದ್ಭುತವಾಗಿ ಹಾಡಬಲ್ಲವರಾಗಿದ್ದ ದಾಸಭಾಗವತರು, ಬಡಗು ತಿಟ್ಟಿನೊಳಗಿನ ವಿಶಿಷ್ಟ ಪ್ರಬೇಧಗಳಾದ ಬಡಾಬಡಗು  ಮತ್ತು ಕುಂದಾಪುರ ಮಟ್ಟು ಎರಡನ್ನೂ ಸಮವಾಗಿ ನಿರ್ವಹಿಸಬಲ್ಲವರಾಗಿದ್ದರು. ಮೂವತ್ತಕ್ಕಿಂತ ಹೆಚ್ಚು ಪ್ರಸಂಗಗಳ ಕಂಠಪಾಠ, ತಾವೇ ಬೆಳೆಸಿಕೊಂಡ ಯಕ್ಷಗಾನಕ್ಕೊಪ್ಪುವ ಆಕರ್ಷಕ ಹಾಡಿನ ಶೈಲಿ, ಸಮುದ್ರದ ಭೋರ್ಗರೆತಕ್ಕೆ ಹೋಲಿಸಲ್ಪಡುತ್ತಿದ್ದ ತುಂಬು ಸ್ವರ, ಅಪ್ರತಿಮ ಲಯ ಸಿದ್ಧಿ ಮತ್ತು
ರಂಗಸ್ಥಳದ ಮೇಲಿನ ಬಿಗಿ ಹಿಡಿತಗಳಿಂದ ಅಪಾರ ಯಕ್ಷಗಾನ ಪ್ರೇಮಿಗಳ ಮಾತ್ರವಲ್ಲದೇ ಯಕ್ಷಗಾನದ ಇತಿಹಾಸದಲ್ಲಿ ಅತ್ಯಂತ ಹೆಸರು ಗೌರವ ಪಡೆದ ಕಲಾವಿದರ ಮೆಚ್ಚಿನ ಭಾಗವತರು ಕೂಡ ಆಗಿದ್ದರು. ಆ ಸಮಯದಲ್ಲಿ ಮೋಡಿಯ ಕುಣಿತ, ಭಾವಪೂರ್ಣ ಅಭಿನಯಗಳಿಂದ ಪ್ರೇಕ್ಷಕರಿಗೆ ವಿದ್ಯುತ್ ಸಂಚಾರ ಮಾಡಿಸುತ್ತಿದ್ದ ಕೆರೆಮನೆ ಶಿವರಾಮ ಹೆಗಡೆ (ಬಡಾಬಡಗು ಶೈಲಿ ) ಮತ್ತು ಅದ್ಭುತ ಚಲನೆಯ ವಿಶಿಷ್ಟ ಕುಣಿತದ ಕಲಾವಿದ ಎನ್ನುವ ಕೀರ್ತಿ ಇದ್ದ ವೀರಭಧ್ರನಾಯ್ಕರನ್ನು (ಕುಂದಾಪುರದ ಮಟಪಾಡಿ ಮಟ್ಟು ) ದಾಸ ಭಾಗವತರು ಕುಣಿಸಿದವರು. ನರಸಿಂಹದಾಸರ ಭಾಗವತಿಕೆಗೆ ತಿಮ್ಮಪ್ಪ ನಾಯ್ಕರ ಮದ್ದಳೆ, ಯಕ್ಷಗಾನ ಹಿಮ್ಮೇಳದಲ್ಲಿ ಜನರು ಬಯಸುವ ಚಿರಂತನ ಜೋಡಿಯಾಗಿತ್ತು. ದಾಸಭಾಗವತರ ಕಲಾ ಜೀವನದ ಉಚ್ಚ್ರಾಯದ ಕಥೆಗಳನ್ನು ನಮ್ಮ ಹಿಂದಿನ ತಲೆಮಾರಿನ ಪ್ರೇಕ್ಷಕರಿಂದ, ಹಿರಿಯ ಕಲಾವಿದರಿಂದಲೇ ಕೇಳಬೇಕು. ನನ್ನ ಪೀಳಿಗೆಯವರಿಗೆ ದಾಸ ಭಾಗವತರ ಹಾಡುಗಾರಿಕೆ ಕೇಳಲು ಸಿಕ್ಕಿರುವ ಸಾಧ್ಯತೆಗಳು ಬಹಳ ಕಡಿಮೆ. 1992ರಲ್ಲಿ  ಮಂಗಳೂರಿನಲ್ಲಿ ನಡೆದ
“ಯಕ್ಷಧ್ವನಿ” ಎನ್ನುವ  ಶ್ರುತಿ ರಾಗ ಲಯ ತಾಳಗಳ ವಿಶಿಷ್ಟ ಕಾರ್ಯಕ್ರಮದಲ್ಲಿ ಇವರು ಹಾಡಿದ “ಶ್ರೀಕೃಷ್ಣ  ಪಾರಿಜಾತ” ಪ್ರಸಂಗದ ಹಾಡುಗಳ ವಿಡಿಯೋಗಳು ಈಗಲೂ ವಾಟ್ಸಾಪ್ ಮುಖಾಂತರ ಸುತ್ತು ಹೊಡೆಯುತ್ತವೆ.  ಕೃಷ್ಣ ಸತ್ಯಭಾಮೆಯರು  ಸುರಲೋಕಕ್ಕೆ ಹೋದಾಗ ಅಲ್ಲೆಲ್ಲ  ತುಂಬಿರುವ ಪರಿಮಳದ ಬಗ್ಗೆ ಸತ್ಯಭಾಮೆಗೆ ಮೂಡುವ ಕುತೂಹಲ, ಕೃಷ್ಣನು ಉತ್ತರಿಸುವ ಸಂದರ್ಭದ ಹಾಡುಗಳು ಅವು.  ದಾಸ ಭಾಗವತರ ಸ್ವರ ಮಾಧುರ್ಯ ಶಿಥಿಲಗೊಂಡಿದ್ದರೂ  ಅಂದಿನ  ಕಾರ್ಯಕ್ರಮದಲ್ಲಿ  ಹಾಡಿದ ಎಲ್ಲ ಹಾಡುಗಳೂ ಅವರ ಕಲಾ ಔನ್ನತ್ಯದ ಕಾಲವನ್ನು  ನೆನಪಿಸಿತ್ತು. “ವರಮನೋಹರೆ ಕೇಳು ಪಾರಿಜಾತವಿದು” ಎನ್ನುವ ಪದ್ಯ ಹಾಡುವಾಗ ಪುರಾಣ ಪ್ರಪಂಚಕ್ಕೆ ಎಳೆದೊಯ್ದು  ಶರಧಿ ಮಥನದಲ್ಲಿ
ಹುಟ್ಟಿದ ಅತ್ಯಂತ ಅಪೂರ್ವವಾದ  ಪಾರಿಜಾತ ವೃಕ್ಪದೆದುರು ನಮ್ಮನ್ನೂ ನಿಲ್ಲಿಸುವ ಪ್ರಯತ್ನ ನಡೆಯುತ್ತದೆ. ತೆಂಕು ಬಡಗು ತಿಟ್ಟುಗಳ ಹಿರಿಯ ಕಿರಿಯ ಭಾಗವತರ ಹಾಡುಗಾರಿಕೆಯ ಸಮ್ಮಿಲನದ ಆ ಕಾರ್ಯಕ್ರಮ ಯಕ್ಷಗಾನ ಲೋಕದಲ್ಲಿ ಲಭ್ಯ ಇರುವ ಒಂದು ಅಮೂಲ್ಯ ಅಪೂರ್ವ ದಾಖಲೀಕರಣವೂ ಹೌದದು. ಅಂದಿನ ಕಾರ್ಯಕ್ರಮದಲ್ಲಿ ನರಸಿಂಹ ದಾಸರನ್ನು ಪರಿಚಯಿಸುವಾಗ  ಹಿರಿಯ ಅರ್ಥಧಾರಿಗಳೂ ವಿದ್ವಾಂಸರೂ ಆದ ಪ್ರಭಾಕರ ಜೋಶಿಯವರು, ಅವರನ್ನು ಯಕ್ಷಗಾನ ಕಂಡ “ಸರ್ವಶ್ರೇಷ್ಠ ಭಾಗವತರು ಎಂದು ತರ್ಕಿಸಬಹುದು” ಎಂದಿದ್ದರು
(arguably the greatest ). ದಾಸ ಭಾಗವತರು ರಂಗಸ್ಥಳದಲ್ಲಿ ಸಾಮ್ರಾಟರಾಗಿ ಮೆರೆಯುತ್ತಿದ್ದ ಕಾಲದಲ್ಲಿ ಅವರ ಭಾಗವತಿಕೆ ಕೇಳಲೆಂದೇ ಪಾರಿಜಾತ ಪ್ರಸಂಗವನ್ನು ಆಡಿಸುತ್ತಿದ್ದರು ಎಂದಿದ್ದರು. ಯಕ್ಷಗಾನದ ವಿಮರ್ಶಕರು ಪತ್ರಕರ್ತರು ಆದ ರಾಘವನ್ ನಂಬಿಯಾರ್ ಮತ್ತು ಹೆಸರಾಂತ ಹಿರಿಯ ಮದ್ದಲೆಗಾರ ಹಿರಿಯಡ್ಕ ಗೋಪಾಲರಾಯರು ಕೂಡ, ದಾಸಭಾಗವತರ ಲಯಗಾರಿಕೆಗೆ ಯಕ್ಷಗಾನ ಲೋಕದಲ್ಲಿ ಸಾಟಿಯೇ ಇರಲಿಲ್ಲ ಎಂದು ಬೇರೆ ಬೇರೆ ಸಂದರ್ಭಗಳಲ್ಲಿ ಹೇಳಿದ್ದಾರೆ ಬರೆದಿದ್ದಾರೆ .

ದಾಸ ಭಾಗವತರು ತಮ್ಮ ಭಗ್ನ  ಸ್ವರದಲ್ಲೂ ಅಂದಿನ ಕಾರ್ಯಕ್ರಮದಲ್ಲಿ ಹಾಡಿದ ಹಾಡುಗಳನ್ನು ನೇರವಾಗಿ ಕೇಳಿದ  ಪ್ರೇಕ್ಷಕರು ಈಗಲೂ ಆ ಕಾರ್ಯಕ್ರಮದ ರಸಘಳಿಗೆಗಳನ್ನು ಮೆಲುಕು ಹಾಕುತ್ತಾರೆ.  ಯೂಟ್ಯೂಬ್  ಮೂಲಕ ಮತ್ತೆ ಮತ್ತೆ ಅಂದಿನ ಕಾರ್ಯಕ್ರಮದ ಮರುವೀಕ್ಷಣೆ ಮಾಡುತ್ತಾರೆ. ಮಂಗಳೂರಿನಲ್ಲಿ “ಯಕ್ಷಧ್ವನಿ” ಕಾರ್ಯಕ್ರಮ ನಡೆದ ನಂತರ ಉಡುಪಿಯಲ್ಲಿ  ಹಳೆಯ ಹೊಸ ತಲೆಮಾರಿನ ಭಾಗವತರ ಕೂಟದಲ್ಲಿ ನಡೆದ ಗಾನ ವೈವಿಧ್ಯ ಕಾರ್ಯಕ್ರಮದಲ್ಲೂ ದಾಸಭಾಗವತರ   ಹಾಡುಗಾರಿಕೆ ಅತ್ಯಂತ ಪ್ರಶಂಸೆಯನ್ನು ಪಡೆದಿತ್ತು .
ಧ್ವನಿಮುದ್ರಣ ಕಂಡು ಅಂಗಡಿಯಲ್ಲಿ ಮಾರಾಟವಾದ ದಾಸ ಭಾಗವತರ ಏಕೈಕ ಅಥವಾ ಬೆರಳೆಣಿಕೆಯ ಆಡಿಯೋ ಕ್ಯಾಸೆಟ್ ಗಳಲ್ಲಿ  ಅದೂ ಒಂದು ಇರಬೇಕು. ಇನ್ನು ದಾಸ ಭಾಗವತರು ಆಕಾಶವಾಣಿಯಲ್ಲಿ ಅನೇಕ ಪ್ರಸಂಗಗಳನ್ನು ಹಾಡಿದ್ದರಾದರೂ  ಅವ್ಯಾವುವೂ  ಈ ಕಾಲದ
ಪ್ರೇಕ್ಷಕರನ್ನು ತಲುಪದಿದ್ದುದು ದಾಸಭಾಗವತರನ್ನು ಸುತ್ತುವರಿದಿದ್ದ ಹಲವು ದುರಂತಗಳಲ್ಲಿನ ಒಂದು ದುರಂತ ಮತ್ತೆ ಯಕ್ಷಗಾನ ಪ್ರೇಕ್ಷಕರ  ದೌರ್ಭಗ್ಯ.   ೯೦ರ ದಶಕದ ಆ ಎರಡು ದಾಖಲೀಕರಣಗಳ ಸಮಯದಲ್ಲಿ ತಮ್ಮ ಆಕರ್ಷಕವಾದ ಸ್ವರವನ್ನು ಕಳೆದುಕೊಂಡಿದ್ದರೂ, ದಾಸ ಭಾಗವತರ  ವರ್ಚಸ್ಸು ಲಯ ಹುಮ್ಮಸ್ಸು, ಸಿದ್ಧಿ, ಆತ್ಮ ವಿಶ್ವಾಸ  ಕುಂದಿರಲಿಲ್ಲ. ಅವರು  ಪ್ರತಿ ಹಾಡನ್ನು ನಿರ್ವಹಿಸಿದ ರೀತಿಯೂ ಯಕ್ಷಗಾನದ ಇತಿಹಾಸದಲ್ಲಿ ಎಲ್ಲೋ ಮರೆಯಾಗಿರುವ ಪುರಾತನ ಸುವರ್ಣ ಕಾಲವನ್ನು ನೆನಪಿಸುತ್ತಿತ್ತು.  ಹಾಡಿನ ನಡುವೆ, ಅತ್ಯಂತ ಸ್ಪಷ್ಟವಾಗಿ ಕೇಳಿಸುವ  ತಾಳದ ಪ್ರತಿ ಪೆಟ್ಟಿನ  ಸದ್ದು, ನಿಧಾನದಲ್ಲಿಯೂ ವೇಗದಲ್ಲಿಯೂ ನಿಖರವಾಗಿರುವ ತಾಳದ ಚಲನೆ, ಗತಿ ಅವರ ಲಯಗಾರಿಕೆಯ ಕಿರು ಝಲಕ್
ಒದಗಿಸುತ್ತಿದ್ದವು.  ಹಾಡುವಾಗ ಸುತ್ತಲಿನ ವಿದ್ಯಮಾನವನ್ನು ಕುತ್ತಿಗೆ ಕಣ್ಣುಗಳ ನಿಧಾನ  ಚಲನೆಯಲ್ಲಿ  ಗಮನಿಸುವ, ಯಾರಿಗೂ ಯಾವುದಕ್ಕೂ ಅಂಜದ ಅಳುಕದ ಆತ್ಮವಿಶ್ವಾಸ ಹೊತ್ತು  ಇಲ್ಲಿ ನಾನೇ  ಸೂತ್ರಧಾರ ಎನ್ನುವ ನಿಲುವಿನಲ್ಲಿ  ಅವರು ಭಾಗವತಿಕೆ ನಡೆಸುತ್ತಿದ್ದ ರೀತಿ  ಕಣ್ಣಿಗೆ ಕಟ್ಟುತ್ತಿತ್ತು. ಪದ್ಯ ಸಾಹಿತ್ಯದ ಸ್ಪಷ್ಟತೆಯ ಬಗ್ಗೆ ಶಬ್ದಗಳ ರೂಪದ ಕುರಿತು ಅವರಿಗಿದ್ದ ಎಚ್ಚರ ಕಾಳಜಿ ಆ ಪ್ರಸ್ತುತಿಗಳಲ್ಲೂ ಕಾಣಿಸುತ್ತಿತ್ತು.

 ಒಮ್ಮೆ ಮೇರು ಕಲಾವಿದ, ಕುಣಿತದ ಗುರು ವೀರಭಧ್ರನಾಯ್ಕರಿಗೂ ಅವರನ್ನು ಕುಣಿಸುವ ದಾಸಭಾಗವತರಿಗೂ ಸ್ಪರ್ಧೆ ಬಿದ್ದಿದ್ದಂತೆ. ಅಂದಿನ ಯಕ್ಷಗಾನದಲ್ಲಿ ದಾಸ ಭಾಗವತರು ಮತ್ತು ಮದ್ದಲೆಗಾರ ತಿಮ್ಮಪ್ಪ ನಾಯ್ಕರು ಸೇರಿ ವೀರಭಧ್ರನಾಯ್ಕರ ಕುಣಿತದ ತಾಳ
ತಪ್ಪಿಸುತ್ತೆವೆಂದು ಪಂಥ ಹಾಕಿಕೊಂಡಿದ್ದರಂತೆ. ಭಾಗವತ ಮತ್ತು ಮದ್ದಲೆಗಾರರ ಸಾಮರ್ಥ್ಯ ಮತ್ತು  ನಾಜೂಕಿನ ಹೊಂದಾಣಿಕೆಯಲ್ಲಿ ಅಂದು ವೀರಭಧ್ರನಾಯ್ಕರು ತಾಳ ತಪ್ಪಿದರಂತೆ. ಅನಿರೀಕ್ಷಿತ ಮುಖಭಂಗದಿಂದ ಬೇಸರಗೊಂಡ ವೀರಭಧ್ರ ನಾಯ್ಕರು ದಾಸಭಾಗವತರಲ್ಲಿ ಮಾತು ಬಿಟ್ಟರಂತೆ. ಕೆಲವು ಸಮಯದ ನಂತರ ಮಾರಣಕಟ್ಟೆ ದೇವಸ್ಥಾನದ ಮೊಕ್ತೇಸರರ ಸಮಕ್ಷಮದಲ್ಲಿ ಮೇರು ಕಲಾವಿದರ ನಡುವೆ ರಾಜಿ ಆಯಿತಂತೆ. ಇನ್ನು ನಮ್ಮ ಕಾಲದ ಶ್ರೇಷ್ಠ ಭಾಗವತರಲ್ಲೊಬ್ಬರಾಗಿದ್ದ ಕಡತೋಕ ಮಂಜುನಾಥ ಭಾಗವತರಿಗೆ ದಾಸಭಾಗವತರು
ಪ್ರೇರಣೆ ಆಗಿದ್ದವರು. ಇಡುಗುಂಜಿ ಮೇಳದಲ್ಲಿ ಕೆರೆಮನೆಯ ನಾಲ್ಕು ತಲೆಮಾರುಗಳನ್ನು ಕುಣಿಸಿದ, ಇನ್ನೋರ್ವ ಅತ್ಯುತ್ತಮ  ಭಾಗವತ  ನೆಬ್ಬೂರು ನಾರಾಯಣ ಭಾಗವತರನ್ನು ಸಂದಶನವೊಂದರಲ್ಲಿ ನಿಮ್ಮ ನೆಚ್ಚಿನ ಭಾಗವತರು ಯಾರು ಎಂದು ಕೇಳಿದಾಗ, ಅವರು ಮೊದಲು
ಹೇಳಿದ್ದ  ಹೆಸರು ದಾಸಭಾಗವತರದು .ದಾಸ ಭಾಗವತರ ಭಾಗವತಿಕೆಯ ತಾಳಮದ್ದಲೆಯೊಂದರಲ್ಲಿ ಪ್ರಸಿದ್ಧ ಅರ್ಥದಾರಿಯಾಗಿದ್ದ ಶೇಣಿ ಗೋಪಾಲಕೃಷ್ಣ ಭಟ್ಟರು ತಮ್ಮ ಒಂದು ಪದ್ಯಕ್ಕೆ ಸರಿಯಾದ ಅರ್ಥ ಹೇಳಲಿಲ್ಲ ಎನ್ನುವ ಕಾರಣಕ್ಕೆ, ಮುಂದಿನ ಪದವನ್ನು ಹಾಡದೇ, ಶೇಣಿಯವರಿಗೆ “ಈಗ ನನ್ನ ಪದಕ್ಕೊಂದು ಅರ್ಥ ಹೇಳಿ” ಎಂದು ಸೂಚಿಸಿದ ಘಟನೆಯನ್ನು ಹಿರಿಯ ಭಾಗವತ ಸುಬ್ರಹ್ಮಣ್ಯ ಧಾರೇಶ್ವರರು ಒಮ್ಮೆ ನೆನಪು ಮಾಡಿಕೊಂಡಿದ್ದರು. ಅಪ್ರತಿಮ ಪ್ರತಿಭೆ, ಕಲಾ ಸಂಪನ್ನತೆ, ಸಿದ್ಧಿಯ ಔನ್ನತ್ಯ ಎಲ್ಲವೂ ಮೇಳೈಸಿದ ಪ್ರಸಂಗವನ್ನು ಬಿಗಿ ಕಳೆದುಕೊಳ್ಳದಂತೆ ಪ್ರಸ್ತುತ ಪಡಿಸುವ, ರಂಗದಲ್ಲಿ ಭಾಗವತನಾಗಿರುವ ತಾನೇ ನಿರ್ದೇಶಕ ಎಂದು ಆತ್ಮವಿಶ್ವಾಸದಲ್ಲಿ  ಸಾರಿಹೇಳುವ ಹಲವು ಘಟನೆಗಳು ಹುಡುಕುತ್ತ ಹೋದರೆ ಕಣ್ಣು ಮುಂದೆ ಬರುತ್ತವೆ. ದಾಸ ಭಾಗವತರ ನೇರ ಅನುಭವ ಭಾಗ್ಯ ಈ ಕಾಲದ ಯಕ್ಷಗಾನ ಆಸಕ್ತರಿಗೆ  ಇಲ್ಲದಿದ್ದರೂ, ಅವರನ್ನು ಗೌರವಿಸುತ್ತಿದ್ದ ಅವರ ಸಿದ್ಧಿ ಪ್ರಸಿದ್ಧಿಗಳನ್ನು ಹತ್ತಿರದಿಂದ ಕಂಡು ಆಕರ್ಷಿತರಾಗಿದ್ದ ಪ್ರಭಾವಿಸಲ್ಪಟ್ಟಿದ್ದ ಕೆಲವು ಹಿರಿಯ ಕಲಾವಿದರು, ಪ್ರೇಕ್ಷಕರ ಮೂಲಕವಷ್ಟೇ ದಾಸ ಭಾಗವತರು  ಸದ್ಯಕ್ಕೆ ಸಿಗುತ್ತಾರೆ. ಇಲ್ಲದಿದ್ದರೆ, ವೃದ್ಧಾಪ್ಯದ ಸಮಯದಲ್ಲಿ ದಾಖಲೀಕರಣಗೊಂಡ ಕೆಲವು ಹಾಡುಗಳ ಮೂಲಕ, ವೈಭವದಲ್ಲಿ ಹಿಂದೆಂದೋ ನಳನಳಿಸುತ್ತಿದ್ದ ಅರಮನೆಯೊಂದು ಅಕಸ್ಮಾತ್ ಕುಸಿದುಬಿದ್ದು ಅವಶೇಷವಾಗಿರುವುದನ್ನು ನೆನಪಿಸುತ್ತಾರೆ.

ತನ್ನ ಪ್ರತಿಭೆ, ವರ್ಚಸ್ಸುಗಳಿಂದ ಚಿರಸ್ಮರಣೀಯ ಪ್ರದರ್ಶನಗಳನ್ನು ನೀಡುತ್ತಾ ಜನರಿಗೆ ಕಥೆ ಪಾತ್ರಗಳನ್ನು ಸಾಕ್ಷಾತ್ಕರಿಸುತ್ತಿದ್ದ ದಾಸ ಭಾಗವತರು ರಂಗದ ಮೇಲೆ ಸಾಮ್ರಾಟರಾಗಿದ್ದವರು. ದಂತಕತೆಯಾಗಿ ಯಕ್ಷಗಾನದ ಸೀಮೆಯಲ್ಲಿ ಹಬ್ಬಿಹರಡಿದವರು. ಇಂದಿಗೆ
60-70ವರ್ಷಗಳ ಹಿಂದೆ ಅಪಾರ ಜನಾಕರ್ಷಣೆ, ಮೇರು ತಾರಾಮೌಲ್ಯವನ್ನು ಪಡೆದಿದ್ದವರು. ಆದರೆ ರಂಗಸ್ಥಳದಿಂದ ಕೆಳಗೆ,ಚೌಕಿಯ ಹೊರಗೆ  ಬದುಕಿನ ಬಹುತೇಕ ಕಾಲವನ್ನು ಹುಲ್ಲಿನ ಸೋರುವ ಮಾಡು ಮುರುಕು ಮನೆಯಲ್ಲಿ ತೀವ್ರ ಬಡತನದಲ್ಲಿ ಕಳೆದವರು. ಬದುಕಿನ ಕೊನೆಯ
ಕಾಲದಲ್ಲಿ ಗ್ರಾಮಸ್ಥರು ಹಣ ಸಂಗ್ರಹಿಸಿ ಮತ್ತೆ ಸರಕಾರದಿಂದ ಸಹಾಯ ಪಡೆದು ಅವರಿಗೊಂದು ಮನೆ ಕಟ್ಟಿಸಿಕೊಟ್ಟರು. ರಂಗದ ಮೇಲೆ ಚಕ್ರವರ್ತಿಗಳಂತೆ ಮೆರೆಯುವ ಅಪ್ರತಿಮ ಪ್ರತಿಭಾನ್ವಿತರ ಬಣ್ಣದ ಹೊರಗಿನ ಬದುಕಿನಲ್ಲಿ ದಾರಿದ್ಯ್ರ ದುರಂತಗಳೇ ತುಂಬಿರುವ
ಉದಾಹರಣೆಗಳಲ್ಲಿ ದಾಸಭಾಗವತರೂ ಒಬ್ಬರು. ಏರು ತಗ್ಗಿನ ಬದುಕಿನ ನಡುವೆಯೇ ಕಲೆಯ ಒಟ್ಟಿಗೆ ಸಂಬಂಧವನ್ನು ಬದುಕಿದಷ್ಟು ಕಾಲ ಮುಂದುವರಿಸಿದರು. ಹೊಳೆಯುವ ಬೆಳಕಿನ ರಂಗಸ್ಥಳದ ವೈಭವದದಲ್ಲಿ, ಗುಂಗು ಹತ್ತಿಸಿಕೊಂಡು ಅವರನ್ನೇ ಹುಡುಕಿಕೊಂಡು ಬರುತ್ತಿದ್ದ
ಪ್ರೇಕ್ಷಕರ ಕರತಾಡನದ ನಡುವೆ, ಅಲ್ಲದಿದ್ದರೆ ನವರಾತ್ರಿಯ ಹೂವಿನಕೋಲು ತಿರುಗಾಟದಲ್ಲಿ. ದಾಸ ಭಾಗವತರಿಗೆ ಕಂಠಪಾಠವಾಗಿದ್ದ, ಅವರು ಇಷ್ಟಪಟ್ಟು ಆಡಿಸುತ್ತಿದ್ದ, ಪ್ರೇಕ್ಷಕರು ಅವರ ಭಾಗವತಿಕೆಗೋಸ್ಕರ ಮುಗಿಬಿದ್ದು  ನೋಡಬಯಸುತ್ತಿದ್ದ  ಅನೇಕ ಪ್ರಸಂಗಗಳು ಈಗಲೂ
ಬೇರೆಬೇರೆ ರಂಗಸ್ಥಳಗಳಲ್ಲಿ ಆಡಲ್ಪಡುತ್ತವೆ. ಚಂದ್ರಾವಳಿ ವಿಲಾಸ, ಪಾರಿಜಾತ ಪ್ರಸಂಗದ ಹಾಡುಗಳೂ ಕೇಳಿಸುತ್ತವೆ. ಮತ್ತೆ ನವರಾತ್ರಿಯೂ  ಈ ವರ್ಷ ಇನ್ನೇನು ಬರುವ ತಯಾರಿಯಲ್ಲಿದೆ; ಆದರೆ ದಾಸಭಾಗವತರು ಮರಳಿ ಬರಲಾರು, ಮುನಿಸಿಕೊಂಡು ಎಂದೋ ಬಿಟ್ಟು ಹೋದ ಅವರ ಸ್ವರದಂತೆ.

ದಾಸ ಭಾಗವತರ ಕೊನೆಯ ಕಾಲದ ಒಂದು ವಿಡಿಯೋ:

ಹೂವಿನ ಕೋಲು ಪ್ರಕಾರ:

ವೇದಕ್ಕನ ನೆನಪಿನೊಂದಿಗೆ – ಉಮೈರಾ ಬರೆದ ಲೇಖನ

ಈ ವಾರ ಪ್ರಥಮ ಬಾರಿ 'ಅನಿವಾಸಿಗೆ' ಮೂಲತಃ ಮಂಗಳೂರಿನವರಾದ ಹೊಸ ಲೇಖಕಿ  ಉಮೈರಾವನ್ನು ಸ್ವಾಗತಿಸುತ್ತಿದ್ದೇವೆ. ಅವರು ಮೂರು ವರ್ಷಗಳಿಂದ ಗ್ಲಾಸ್ಟರಿನಲ್ಲಿ ವಾಸಿಸುತ್ತಿದ್ದಾರೆ. ತಮ್ಮ ಬಗ್ಗೆ ಅವರಮಾತಿನಲ್ಲೇ ಅವರ ಪರಿಚಯವನ್ನು ಕೇಳೋಣ:
"ನಾನು ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ಇಲೆಕ್ಟ್ರಾನಿಕ್ & ಕಮ್ಯುನಿಕೇಷನ್ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದು ಈಗ UKಯಲ್ಲಿ Aerospace Engineer ಆಗಿ ಕೆಲಸ ಮಾಡುತ್ತಿದ್ದೇನೆ‌. ಪತಿ ಹನೀಫ್ ಕೂಡ ಇಲ್ಲಿ Aerospace Engineer. ನನಗೆ ಸಾಹಿತ್ಯದಲ್ಲಿ ಅಪಾರ ಆಸಕ್ತಿಯಿದ್ದು ಉತ್ತಮ ಪುಸ್ತಕಗಳನ್ನು ಓದುವ ಅಭ್ಯಾಸ ಮೈಗೂಡಿಸಿಕೊಂಡಿದ್ದೇನೆ‌.
ನನ್ನ ಜೀವನದ ಅನುಭವಗಳನ್ನು, ಮನದಲ್ಲಿ ಮೂಡುವ ಭಾವನಾತ್ಮಕ ವಿಚಾರಗಳನ್ನು ಅಕ್ಷರಗಳಲ್ಲಿ ವ್ಯಕ್ತಪಡಿಸಿ ಬರೆಯುವಲ್ಲಿ ಆಸಕ್ತಳಾಗಿದ್ದೇನೆ. ಪುಸ್ತಕಗಳ ಓದುವುದು ಮತ್ತು ಬರವಣಿಗೆ ನನ್ನ ಪ್ರಮುಖ ಹವ್ಯಾಸಗಳು."

ತಮ್ಮ ನೆರೆಹೊರೆಯಲ್ಲೇ ವಾಸಿಸುವ ವೇದಕ್ಕನ ಹೃದಯಸ್ಪರ್ಶಿ ವ್ಯಕ್ತಿಚಿತ್ರವನ್ನು ಇಲ್ಲಿ ಬರೆದಿದ್ದಾರೆ. ಓದಿ ಪ್ರೋತ್ಸಾಹಿಸಿ ನಿಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಿ.

ಸಂಪಾದನೆಗೆ ಸಹಾಯ ಮಾಡಿ, ಸ್ವಲ್ಪೇ ಸಮಯದಲ್ಲಿ ಚಿತ್ರವನ್ನು ಬರೆದು ಶೋಭೆಹೆಚ್ಚಿಸಿದ ಗುಡೂರ್ ಅವರಿಗೆ ಋಣಿ. (-ಸಂ )
******************************************
ಮುಂಜಾನೆ ಹಂಡೆಯಲ್ಲಿ ಕಾದ ಬಿಸಿನೀರ ಸ್ನಾನ ಮುಗಿಸಿ ಬಂದ ನನಗೆ, ಬಿಸಿ ಬಿಸಿಯಾದ ನೀರ್ದೋಸೆ ಮಾಡಿಟ್ಟ ಅಮ್ಮ, ‘ಬೇಗ ರೆಡಿಯಾಗಿ ಇದನ್ನು ತಿಂದು ಹೋಗು’ ಅಂದಾಗ, ‘ಅಮ್ಮಾ…… ನಾನು ಮತ್ತು ಸ್ಮಿತಾ ಒಂದೇ ಬಸ್ಸಲ್ಲಿ ಹೋಗ್ಬೇಕು’ ಅಂತ ಹೇಳಿ ‘ಒಂದೇ ಒಂದು ದೋಸೆ ಸಾಕಮ್ಮ’ ಅಂದು ಬೇಗ ಬೇಗನೆ ತಿಂದು ಬಸ್ಸಿಗೆ ಓಡಿಬಿಟ್ಟೆ.

ಅಮ್ಮ ಏನೋ ಗೊಣಗುತ್ತಿರುವುದು ಕೇಳಿಸ್ತಿತ್ತು. ‘ಇವರಿಬ್ಬರ ಮಾತು ಮುಗಿಯೋದೇ ಇಲ್ಲ ಎಂದಿರಬಹುದು’ ಅಂತ ಮನಸ್ಸಲ್ಲೇ ಮುಸಿಮುಸಿ ನಗ್ತಾ ಓಡಿ ಹೋದೆ.
ನಾನು ಮತ್ತು ಸ್ಮಿತಾ ಇಬ್ಬರೂ ಮಾತಿನಲ್ಲಿ ಒಬ್ಬರನ್ನೊಬ್ಬರು ಮೀರಿಸುವವರು. ನನ್ನ ಮಾತಿನಲ್ಲಿ ನಾನು ಕಂಡದ್ದು, ಕೇಳಿದ್ದು, ಸಂಬಂಧಿಕರು, ನೆರೆಹೊರೆಯವರೆಲ್ಲರ ವಿಷಯವೂ ಒಳಗೊಂಡಿರುತ್ತಿದ್ದರೆ ಅವಳು ನನಗಿಂತಲೂ ಇನ್ನೂ ಎರಡು ಹೆಜ್ಜೆ ಮುಂದೆ. ಅದೆಷ್ಟೋ ವಿಷಯ ತಂದು ಸಾಸಿವೆ ಹುರಿದಂತೆ ಮಾತನಾಡುತ್ತಿದ್ದಳು.

ಆ ದಿನ ಕಾಲೇಜು ಮುಗಿಸಿ ಬರುವಾಗ ನಾನು ಆ ತಿಂಗಳ ‘ತುಷಾರ’ ಎತ್ತಿಕೊಂಡೆ.

ಅದೇನೋ ಮಾತಾಡುವಾಗ ಅವಳು ಕೇಳಿದ್ಲು “ಉಮೈರಾ, ಅದು ಹೇಗೆ ಮೊನ್ನೆ ನೀನು ಮಹಾಭಾರತದ ಕ್ವಿಜ್ ಅಲ್ಲಿ ಬಹುಮಾನ ತಗೊಂಡೆ? ನೀವು ನಮ್ಮ ಹಿಂದೂ ಗ್ರಂಥಗಳನ್ನು ಓದಲ್ಲ ಅಲ್ವಾ?’

‘ಹ್ಮ್, ಹಾಗೇನಿಲ್ಲ ಸ್ಮಿತಾ, ನಮ್ಮ ಕುರಾನಿನ ಮೊದಲ ಸೂಕ್ತವೇ “ಇಖ್ರಅ್” ಅಂದ್ರೆ “ಓದು” ಎಂದಾಗಿದೆ. ನಮ್ಮಜ್ಜಿಯ ಹತ್ರ ಪುರಾಣ ಸೇರಿದಂತೆ ಹಲವಾರು ಪುಸ್ತಕಗಳಿವೆ. ಅದರಲ್ಲಿದ್ದ “ಸಂಕ್ಷಿಪ್ತ ಮಹಾಭಾರತ“ ಅನ್ನುವ ಒಂದು ಪುಸ್ತಕ ನಾನು ಓದಿದ್ದೆ’ ಅಂದೆ.

ಹೀಗೆ ನಮ್ಮ ಮಾತಿನ ಸರಣಿಗಳು ದಿನದಿನವೂ ಇಂತಹ ವಿಭಿನ್ನ ಸಂಪ್ರದಾಯದ ಪರಸ್ಪರರ ನಡುವಿನ ಕೌತುಕದ ನಾನಾ ಸುದ್ದಿಗಳೊಂದಿಗೆ ಸಾಗುತ್ತಲೇ ಇರುತ್ತಿತ್ತು.

‘ಅಜ್ಜಿನೂ ಓದ್ತಾರೆ’ ಅಂತ ಕೇಳಿದಾಗ ಚಕಿತಗೊಂಡಿದ್ದ ಅವಳಿಗೆ ಅವರಿಗಿದ್ದ ಅತಿಯಾದ ಓದಿನ ಹವ್ಯಾಸವನ್ನು ನಾನು ಬಲು ಖುಶಿ ಮತ್ತು ಹೆಮ್ಮೆಯಿಂದ ಹೇಳಿದ ಆ ನೆನಪು ಮೊನ್ನೆ ಮೊನ್ನೆ ನಡೆದಂತಿದೆ.

ನನ್ನ ಮಾತುಗಳ ನಡುವೆ ಪದೇಪದೇ ಅಜ್ಜಿಯ ವಿಷಯ ಬರುತ್ತಿದ್ದರೆ, ಅವಳ ಮಾತುಗಳ ನಡುವೆ ಪದೇಪದೇ ಬರುತಿದ್ದ ಹೆಸರು ಅವಳ ಇಷ್ಟದ ‘ವೇದಾ’ ಎಂಬ ಹೆಂಗಸಿನದ್ದು.

ಆ ವೇದಕ್ಕನಿಗೂ ಅವಳು ನನ್ನ ಬಗ್ಗೆ ಹೇಳಿ ಹೇಳಿ, ವೇದಕ್ಕನಲ್ಲಿ ನನ್ನ ಬಗ್ಗೆ ಒಂದು ಕುತೂಹಲದ ಪ್ರಪಂಚವನ್ನೇ ಸೃಷ್ಟಿಸಿದ್ದಳು ಸ್ಮಿತಾ.

ನನಗಂತೂ ಆ ವೇದಕ್ಕನ್ನ ಅಲ್ಲೀ ತನಕ ನಾನು ನೋಡದೇ ಇದ್ರೂ, ಅವರಂದ್ರೆ ಅದೇನೋ ತೀವ್ರ ಕುತೂಹಲ ಹುಟ್ಟಿ ಬಿಟ್ಟಿತ್ತು. ವೇದಕ್ಕ ಏನೋ ಒಬ್ಬ ಮಹಾನ್ ಸಾಧಕಿ ಎಂಬ ಮನೋಭಾವ ಬೆಳೆದು ಬಿಟ್ಟಿತ್ತು.

ಒಂದು ದಿನ ಸ್ವಲ್ಪ ಲೇಟಾಗಿ ಶಾಲೆಗೆ ಬಂದ ಸ್ಮಿತ, ನಾನು ಸಿಕ್ಕಿದ ಕೂಡಲೇ ‘ಅಯ್ಯೋ, ಇವತ್ತೇನ್ ಗೊತ್ತ ವೇದಕ್ಕನ ಮಗಳು ಮೊದಲ ಬಾರಿ ಶಾಲೆಗೆ ಹೋಗ್ತಿದ್ದಾಳೆ. ಅವ್ಳು ಹೊರಟು ನಿಂತು ಅಳೋದೇನು, ವೇದಕ್ಕನೂ ಅಳೋದೇನು… ಅದನ್ನು ನೋಡ್ತಾ ಮನೆಯಲ್ಲಿ ನಾವೆಲ್ಲ ತಮಾಷೆ ಮಾಡ್ತಾ ನಿಂತುಕೊಂಡೆವು. ಹಾಗೆ ಸ್ವಲ್ಪ ಲೇಟ್ ಆಯಿತು’ ಅಂದಳು.

ಯಕ್ಷಗಾನದಲ್ಲಿ ಮಹಿಷಾಸುರ, ರಾವಣ ಹೀಗೆ ಯಾವುದೇ ಕಠೋರಹೃದಯಿಯ ಪಾತ್ರವನ್ನು ಕೊಟ್ರೂ ಅಚ್ಚುಕಟ್ಟಾಗಿ ನಿಭಾಯಿಸುವ ವೇದಕ್ಕ ಮಾತ್ರ ನಿಜ ಜೀವನದಲ್ಲಿ ಬಲು ಭಾವ ಜೀವಿ. ಬದುಕಿನ ಸೂಕ್ಷ್ಮಾತಿ ಸೂಕ್ಷ್ಮಗಳನ್ನು ಅರಿತವರಂತೆ ಇರುವ ಅವರ ಆಪ್ತತೆ ಉಕ್ಕಿಸುವ ಮಾತುಗಳು, ಯಾವುದೇ ಕುಹಕ-ಕುತಂತ್ರಗಳಿಲ್ಲದ ಅವರ ನೈಜ ಸಾಧುಸ್ವಭಾವ ಯಾರ ಹೃದಯದಲ್ಲೇ ಆದರೂ ಅವರ ಬಗ್ಗೆ ಪ್ರೀತಿ ಹುಟ್ಟಿಸುವಂತಿತ್ತು. ಮನಸ್ಸಲ್ಲಿರೋದನ್ನೆಲ್ವಾ ಒಮ್ಮೆಲೇ ಸುರಿಯುವ ಮಳೆಯಂತೆ ಅವರ ಮೆಲು ಮಾತುಗಳಲ್ಲೇ ಸುರಿಸಿಬಿಡುತ್ತಿದ್ದರು.

ನನ್ನ ಮತ್ತು ವೇದಕ್ಕನ ಮೊದಲ ಭೇಟಿಯನ್ನಂತೂ ನಾನೆಂದೂ ಮರೆಯಲು ಸಾಧ್ಯವೇ ಇಲ್ಲ.

“ಅಷ್ಟಮಿ ಹಬ್ಬಕ್ಕೆ ನಾವು ಕೊಟ್ಟಿಗೆ ಮಾಡ್ತೇವೆ, ಉಮೈರಾಳನ್ನು ಇನ್ವೈಟ್ ಮಾಡಿದ್ರೆ ಏನು ಅಂದ್ಕೊಂಡೆ ಆಂದ್ರಂತೆ”
ಹಾಗೆ ನಮ್ಮ‌ ಭೇಟಿ‌‌ ಅವರ ಮನೆಯಲ್ಲಿ ಅಷ್ಟಮಿ ದಿನದಂದಾಗಿತ್ತು .

ಮೂರು ಕಲ್ಲುಗಳ ಆ ಮೂಗುತಿ, ಕಣ್ಣಿಗೆ ಕಾಡಿಗೆ, ದೊಡ್ಡ ಬಿಂದಿ, ಕರ್ಲಿ (ಗುಂಗುರು) ಕೂದಲು ಮತ್ತು ಕಲಾವಿದೆ ಎಂದು ಗುರುತಿಸಲು ಸಾಧ್ಯವಾಗುವ ಅವರ ಚೈತನ್ಯಯುತ ಲವಲವಿಕೆಯ ಮಾತುಗಳು.

ಅದೆಷ್ಟು ಲವಲವಿಕೆ, ಅತಿಯಾದ ಅತಿಥಿ ಸತ್ಕಾರ, ಪ್ರೀತಿ ವಾತ್ಸಲ್ಯ ತುಂಬಿದ ವೇದಕ್ಕನ ಆಗಾಗ ತಾರಕಕ್ಕೇರುವ ನಗು ನಮ್ಮ ಆ ದಿನವನ್ನು ಸಂಪನ್ನವಾಗಿಸಿತು.

“ನಾನೆಷ್ಟು ಮಾತಾಡ್ತೇನೆ ಅಲ್ವಾ? ನನ್ನ ಗಂಡ ಹೇಗೆ ಸಹಿಸಿಕೊಳ್ತಾರೋ ಪಾಪ” ಅಂತ ತನ್ನನ್ನೇ ತಮಾಷೆ ಮಾಡಿಕೊಂಡರು.
“ನಂಗೆ ಮಾಸ್ಟರ್ಸ್ ಮಾಡ್ಬೇಕು ಅಂತ ತುಂಬಾ ಇಷ್ಟ ಇತ್ತು “

“ಇನ್ನೂ ಮಾಡ್ಬಹುದಲ್ವಾ?” ಅಂದೆ.

“ಅಯ್ಯೋ ಈ ಮರುಭೂಮಿಗೆ ಎಷ್ಟು ನೀರು ಸುರಿದರೂ ಸರಿಯೇ ಇನ್ನು” ಅಂತ ಮತ್ತೊಮ್ಮೆ ನಗು.

“ಅಲ್ಲ ಅಕ್ಕ, ಮಕ್ಕಳು ಸ್ಕೂಲ್ಗೆ ಹೋದ್ರೆ ಇಡೀ ದಿನ ನೀವೇನ್ ಮಾಡ್ತೀರ?” ಅಂತ ಅಮ್ಮನನ್ನು ಕೇಳಿದಾಗ “ಬೆಳಗ್ಗೆ ಬಂದ ಉದಯವಾಣಿಯನ್ನು ದಿನದಲ್ಲಿ ೪ ಸಲ ಓದಿ ಮುಗಿಸುತ್ತೇನೆ” ಎಂದರು.

ಯಕ್ಷಗಾನ ಲೋಕದಲ್ಲಿ ಅವರ ಸಾಧನೆಗೆ ಸಂದ ಪ್ರಶಸ್ತಿಗಳನ್ನು ತೋರಿಸಿ ಅವರ ಪ್ರೊಫೆಷನಲ್ ವಲಯದ ಬಗ್ಗೆ ಮಾತಾಡಿಕೊಂಡರು. ಅದು ಹೇಗಪ್ಪ ಆ ತರ ಪಾತ್ರಗಳೆಲ್ಲ ಮಾಡುತ್ತಾರೋ ಈಕೆ ಅಂತ ನಾನು ಯೋಚಿಸುವಂತಾಯಿತು.

ಮಾತಲ್ಲಿ ಪ್ರೀತಿ, ವಾತ್ಸಲ್ಯ ತುಂಬಿಕೊಂಡೇ ಮಾತಾಡುವ ಅವರ ಜೊತೆ ಸಮಯ ಕಳೆದದ್ದೇ ಗೊತ್ತಾಗುತ್ತಿರಲಿಲ್ಲ.


ಮನುಷ್ಯರಿಗೇನು ಬೇಕು ಮತ್ತೆ – ತನ್ನ (ಸುತ್ತಲೂ) ಸರೌಂಡಿಂಗ್ನಲ್ಲಿ ಪ್ರೀತಿ, ಕರುಣೆ, ವಾತ್ಸಲ್ಯ ತೋರುವವರಿದ್ದರೆ ಎಲ್ಲವನ್ನೂ ಜಯಿಸಿದಂತೆ ಖುಷಿ ಅಲ್ಲವೇ?

ಅದೆಷ್ಟೋ ಭೇಟಿಗಳು; ಆ ನಂತರದ ದಿನಗಳಲ್ಲಿ ನಮ್ಮದು ನಡೆಯುತ್ತಲೇ ಇತ್ತು. ಮನೆಯಲ್ಲಿ ಏನಾದ್ರೂ ತರಕಾರಿ ಬೆಳೆದ್ವಿ ಅಂದ್ರೆ ವೇದಕ್ಕನ ಮನೆಗೂ ಕಳುಹಿಸಿಕೊಡುವ ಪದ್ದತಿ ಇತ್ತು.

ಪಿಯುಸಿ ಮುಗಿದು ಮುಂದಿನ ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್ ಸೇರುವ ದಿನವೊಂದು ಬಂದಿತ್ತು. ಮನೆಯವರ ಬೀಳ್ಕೊಡುಗೆಯ ಜೊತೆಗೆ ನಮ್ಮ ಆಪ್ತರಾಗಿದ್ದ ವೇದಕ್ಕ ಕೂಡ ಬೀಳ್ಕೊಡಲು ಬಂದಿದ್ದರು. ನಮ್ಮನ್ನು ನೆನಪಿಸ್ಕೊಳ್ತಾ ಇರು, ಕಾಲ್ ಮಾಡು ನಂಗೆ, ಲ್ಯಾಂಡ್ಲೈನ್ ನಂಬರ್ ಗೊತ್ತಿದೆ ಅಲ್ವಾ ಅಂದಿದ್ದರು.


ಅದೊಂದು ದಿನ ಅಮ್ಮ ಕಾಲ್ ಮಾಡಿದವರು ’ವೇದಕ್ಕನಿಗೆ ತುಂಬಾ ಹುಷಾರಿಲ್ಲ, ಕ್ಯಾನ್ಸರ್ ಅದೇನೋ ಫೈನಲ್ ಸ್ಟೇಜಲ್ಲಿ ಇದೆ ಅಂತೆ’, ಅಂತ ಆಘಾತಕಾರಿ ಸುದ್ದಿಯನ್ನು ಹೇಳಿದ್ರು. ನನ್ನ ಮನಸ್ಸಲ್ಲೇನೋ ವೇದಕ್ಕನಿಗೇನಾಗುತ್ತೋ ಅನ್ನುವ ಭಯ. ಆ ದಿನದಿಂದ ಹಾಸ್ಟೆಲಲ್ಲಿ ಅವರದ್ದೇ ನೆನಪು, ಫ್ರೆಂಡ್ ಒಬ್ಬಳತ್ರ ನನ್ನ ದುಗುಡವನ್ನು ಹಂಚಿಕೊಂಡಿದ್ದೆ ಕೂಡ.

ದೇವ್ರೇ ಅವ್ರು ಬೇಗ ಗುಣಮುಖರಾಗಿ ಬರಲಿ ಅಂತ ಮನಸ್ಸು ಪೂರ್ತಿಯಾಗಿ ಬೇಡ್ಕೊಂಡಿದ್ದೆ.
ಕೆಲವೇ ದಿನದ ಪರಿಚಯವಾದ್ರೂ, ಮರೆಯಲಾಗದಂತಹ ಆಪ್ತತೆ ಇತ್ತು ನಮ್ಮಲ್ಲಿ.

ಮತ್ತಿನ ದಿನಗಳಲ್ಲಿ ಕಿಮೊತೆರಪಿ ಮಾಡಿಸಿಕೊಂಡ ವೇದಕ್ಕನನ್ನು ನೋಡಲು ಅಮ್ಮ ಹೋಗಿದ್ರಂತೆ.

ಆದ್ರೆ ಕೆಲವೇ ದಿನಗಳಲ್ಲಿ ವೇದಕ್ಕ ನಮ್ಮನ್ನು ಬಿಟ್ಟು ಅಗಲಿದ ಸುದ್ದಿ ಬಂದಾಗ ಅರಗಿಸಿಕೊಳ್ಳಲು ಆಗಲಿಲ್ಲ. ಕೂದಲು ಎಲ್ಲ ಹೋಯ್ತಕ್ಕ, ಟೋಪನ್ ಹಾಕಿ ಆದ್ರೂ ನಿಮ್ಮ ಮಗಳ ಮದುವೆಗೆ ಬರ್ತೇನೆ ಅಮ್ಮನಿಗೆ ಹೇಳಿದ ಅವರ ಮಾತು, ಇನ್ನೂ ನೆನಪಾಗಿಯೇ ಉಳಿದಿದೆ.

- ಉಮೈರಾ.

**************************************