ಹೀಗೊಂದು (ಹಾಳು) ಹರಟೆ

ನಮಸ್ಕಾರ ಅನಿವಾಸಿ ಬಂಧುಗಳಿಗೆ. ತಮಗೆಲ್ಲ  ಅಕ್ಷಯತೃತೀಯಾ ಹಾಗೂ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು.
‘ಭಕ್ತಿ ಇಲ್ಲದ ಬಡವನು ನಾನಯ್ಯ
ಕಕ್ಕಯ್ಯನ ಮನೆಯಲೂ ಬೇಡಿದೆ,
ದಾಸಯ್ಯನ ಮನೆಯಲೂ ಬೇಡಿದೆ,
ಚೆನ್ನಯ್ಯನ ಮನೆಯಲೂ ಬೇಡಿದೆ,
ಎಲ್ಲ ಪುರಾತನರು ನೆರೆದು
ಭಕ್ತಿ ಭಿಕ್ಷವನಿಕ್ಕಿದರೆ ಎನ್ನ ಪಾತ್ರೆ ತುಂಬಿತ್ತು
ಕೂಡಲ ಸಂಗಮದೇವಾ’.
ವಚನದಲ್ಲಿ ನಾಮಾಮೃತ ತುಂಬಿದ ಬಸವಣ್ಣನವರನ್ನು ತುಂಬು ಮನದಿಂದ ನೆನೆಯೋಣ. ಲೋಕದ ಡೊಂಕ ತಿದ್ದುವ ಉಸಾಬರಿ ಬಿಟ್ಟು ನಮ್ಮ ನಮ್ಮ ತನುವ- ಮನವ ಸಂತೈಸಿಕೊಂಡು , ಇವನಾರವ ಎನ್ನದೇ ಇವ ನಮ್ಮವ ಎಂದು ಜಗವನಪ್ಪಿಕೊಂಡು ಜಗದೀಶನಿಗೆ ಪ್ರಿಯರಾಗೋಣ. ಏನಂತೀರಿ?
ಇಂದಿನ ಓದಿಗಾಗಿ ಹಳೆಯ ಹರಟೆಯೊಂದನ್ನು ನಾನು ಹಂಚಿಕೊಳ್ಳುತ್ತಿರುವೆ. ಓದಿ ನಿಮ್ಮ ಅನಿಸಿಕೆಗಳನ್ನು ನೀವು ಹಂಚಿಕೊಳ್ಳಿ.

~ ಸಂಪಾದಕಿ

ಆಕಳಿಕೆ – ತೂಕಡಿಕೆ

‘ಸಮಯಾ ಸಮಯವುಂಟೇ ಭಕ್ತವತ್ಸಲ ನಿನಗೆ’ಅಂತ ಕನಕದಾಸರು ಹಾಡಿದ್ಹಂಗ ಈ ಆಕಳಿಕಿಗೆ ಸಮಯಾಸಮಯ ಅಂತ ಏನೂ ಇಲ್ಲ...ಕಾರ್ಯಕಾರಣ ಸಂಬಂಧವೂ ಇಲ್ಲ.ಎಲ್ಲೆ ಬೇಕಾದರೂ ಯಾವಾಗ ಬೇಕಾದ್ರೂ ಬಂದಬಿಡತಾವ;ಮಾನ ಕಳೆದುಬಿಡತಾವ.ಯಾವುದರೇ ಕಾರ್ಯಕ್ರಮದಾಗ ಭಾಷಣಕಾರರು ಗಂಭೀರವಾಗಿ ವಿಷಯ ಮಂಡಸೂ ಮುಂದ ಮುಂದಿನ ಸೀಟಿನಾಗ ವಕ್ಕರಿಸಿದ ನೀವು  ‘ಆsss’ಅಂತ ಆಕಳಿಸಿ ಬಾಯಾಗs ವಿಶ್ವರೂಪ ತೋರಿಸಿದ್ರ ಎದುರಿಗಿನವರು ಕಕ್ಕಾಬಿಕ್ಕಿ ಆಗಿಬಿಡತಾರರೀ..ಕ್ಲಾಸ್ ರೂಮ್ ನಾಗ ಟೀಚರ್ ಏನೋ ಗಹನವಾದ ವಿಷಯವನ್ನು ನಿಮ್ಮ ತಲೆಬುರುಡಿನಾಗ ತುಂಬಲಿಕ್ಕೆ ಅಂತ ಹರಸಾಹಸ ಮಾಡಕೋತ ಹೆಣಗಾಡತಿರಬೇಕಾದ್ರ ನೀವು’ಆsss’ ಅಂತ ಆಕಳಿಸಿದ್ರ ಅವರ ಸಿಟ್ಟು ನೆತ್ತಿಗೇರಿ ನಿಮ್ಮನ್ನು ಸ್ಟ್ಯಾಂಡ್ ಅಪ್ ಆನ್ ದ ಬೆಂಚೋ ಇಲ್ಲ ಗೆಟ್ ಔಟ್‌ ಫ್ರಾಮ್ ಮೈಕ್ಲಾಸೋ ಖಂಡಿತ ಮಾಡಿಬಿಡತಾರರೀ. ಇನ್ನ ಕೆಲವೊಮ್ಮೆ ವಯಸ್ಸಾದ ಹಿರಿಯರು ನೀವು ಮಾತಿಗೆ ಸಿಕ್ಕದ್ದೇ ತಡ ತಮ್ಮ ಪುರಾನಾ ಜಮಾನಾದ ಪುರಾಣದ ಕಂತಿ ಬಿಚ್ಚಿದ್ರು ಅಂದ್ರ...ನಿಮ್ಮೂ ಶುರುವಾಗತಾವ ಆಕಳಿಕಿ ಸಾಲಾಗಿ.ಆದ್ರ ಪಾಪ! ಕೆಲವೊಬ್ಬರಂತೂ ಅವನ್ನ ಸಂಪೂಣ೯ ದಿವ್ಯನಿಲ೯ಕ್ಷ್ಯ ಮಾಡಿ ತಮ್ಮ ಕಥಿ ಹಂಗೇ ಮುಂದುವರೆಸಿರತಾರ ಅನ್ರಿ..ನೀವೋ ಆಕಳಿಸಿ ಆಕಳಿಸಿ ಬಾಯಿನೋವು ಬಂದು ಕಣ್ಣೀರು ಕಪಾಳಕ್ಕ ಹರಿಸಿ ದಣಿಯುತ್ತೀರಿ.ಮತ್ತ ಯಾವಾಗರೇ ಯಾರದರೇ  ಪರಿಚಿತರ ಮನಿಗೆ ಹೋಗಿರತೀರಿ ಅಂತಿಟ್ಟುಕೋರಿ.ಅವರ ಮನ್ಯಾಗ ಆಗಷ್ಟೇ  ಮಗಂದೋ ,ಮಗಳದೋ ಮದುವಿ ಆಗಿರತದ..ಮದುವಿ ಫರಾಳ ತಿನ್ನಲಿಕ್ಕೆ ಕೊಡದಿದ್ದರೂ ಸರಿ ಮದುವಿ ಆಲ್ಬಂ- ವಿಡಿಯೋ ತಪ್ಪಲಾರದ ತೋರಸತಾರ.ಆ ಹುಡುಗನೋ ಹುಡುಗಿನೋ ಬಿಟ್ರ ನಿಮಗ ಯಾರೂ ಗೊತ್ತಿರಂಗಿಲ್ಲ..ಆದ್ರೂ ಮೂರಮೂರ ತಾಸು ಕೂತ ಅದನ್ನ ನೋಡ ಅಂದ್ರ ಆಕಳಿಕಿ ಬರದ s ಬಿಟ್ಟಾವ?!
ಹೀಂಗ ಆಕಳಿಸೋದು ಸಭ್ಯತೆ ಅಲ್ಲ ಅಂತ ನಾನೂ ಒಪ್ಪಗೋತಿನಿ.ಆದ್ರ ಅವುಗಳ ನಿಯಂತ್ರಣ ನಮ್ಮಕೈಯಾಗ ಇಲ್ಲ ಅಲ್ರೀ.ತಮ್ಮ ಮನಸ ಬಂದಾಗ ಹಿಂದಮುಂದ ಏನೂ ಸೂಚನೆ ಕೊಡದ ಧಬಕ್ ಅಂತ ಬಂದಿಳಿಯೋ ಅತಿಥಿಗಳಗತೆ ನುಗ್ಗಿ ಬಂದ್ರ ಅದರಾಗ ನಮ್ಮ ತಪ್ಪೇನದ ಅಲ್ಲೇನ್ರಿ? ಇದೆಲ್ಲ ಎಲ್ಲಾರಿಗೂ ಗೊತ್ತಿದ್ರೂ ನಾವು ಮಾತಾಡೂಮುಂದ ಎದುರಿಗಿನವರು ಆಕಳಿಸಿದ್ರ ನಮ್ಮ ಕಣ್ಣು ಕೆಂಪಾಗೋದಂತೂ ಗ್ಯಾರಂಟಿ .ಎಷ್ಟೋ ಸಲ ನಾನೇ ನನ್ನ ಮಕ್ಕಳಿಗೆ ಬಯ್ಯತಿರತೀನಿ...’ನಾನಿಲ್ಲೆ ಗಂಟಲ ಒಣಗಿಸಿಕೊಂಡು ,ತಲಿ ಕೆಡಿಸಿಕೊಂಡು ಇಷ್ಟ ಸೀರಿಯಸ್ಸಾಗಿ ಏನೋ ಹೇಳಲಿಕ್ಹತ್ತೀನಿ..ನೀವು ಆಕಳಿಸಕೋತ ಹೆಂಗ ಕೂತೀರಿ ನೋಡ್ರಿ ನಿಲ೯ಜ್ಜರ ಹಂಗ ‘ಅಂತ.
ಕಳೆದ ಸಲ ವಲ್ಡ್೯ ಕಪ್ ಮ್ಯಾಚ್ ನಡದಾಗ ಪಾಕಿಸ್ತಾನದ ಕ್ರಿಕೆಟ್ ಟೀಮಿನ ಕಪ್ತಾನ್ ಸರಫರಾಜ್ ಆಕಳಿಸಕೋತ ಕೂತಿದ್ದು ಒಂದು ಬ್ರೇಕಿಂಗ್ ನ್ಯೂಸೇ ಆಗಿಬಿಟ್ಟಿತ್ತಲಾ....ಪಾಪ! ಅವರೂ ಮನಷಾರೇ.ಇಷ್ಟೆಲ್ಲಾ ಹಗಲೂ ರಾತ್ರಿ ಪ್ರಾಕ್ಟೀಸ್ ಮಾಡಿ ಆಡೂಮುಂದಾಗ ಸೋಲೂ ಹಂತದಾಗ ಬ್ಯಾಸರಕೀಲೇ ಒಂದು ಆಕಳಿಸೋ ಸ್ವಾತಂತ್ರ್ಯನೂ ಅವರಿಗಿಲ್ಲ ಅಂದ್ರ ಹೆಂಗರೀ?
ಇನ್ನ ಆಫೀಸಿನಾಗ ಬಾಸ್ ಏನರೇ ಲೆಕ್ಚರ್ ಕೊಡೂಮುಂದ ಆಕಳಿಸಿದ್ರೋ ಮುಗೀತು.ನಿಮ್ಮ ಭತ್ಯೆ ಕಟ್ ಅಂತನೇ ಲೆಖ್ಖ.ಮುಂದ ನಿಮಗ್ಯಾವ ಸಿ.ಎಲ್.ಸ್ಯಾಂಕ್ಷನ್ ಆಗಂಗಿಲ್ರಿ.ನಿಮ್ಮ ಆಕಳಿಕೆ ಸೀದಾ ಅವನ ಅಹಂನ್ನೇ ನುಂಗಿಬಿಟ್ಟಿರತದ.ಅದಕ್ಕಽ ಎಚ್ಚರಿಕೆಲೆ ಇರಬೇಕು.ಆದ್ರ ಮಜಾ ಅಂದ್ರ ಯಾವಾಗ ನೀವು ಎಚ್ಚರಕಿಲೇ ಇರಬೇಕು ಅನಕೋತಿರೋ ಅವಾಗೇ ಇವುಗಳ ಹಾವಳಿ ಭಾಳ ಇರತದ.ಬೆಳತನಕಾ ದೋಸ್ತ್ ರ ಜೋಡಿ ಹರಟಿ ಹೊಡಿಯೂಮುಂದ ,ರಾತ್ರೆಲ್ಲ ನಿದ್ದಿಗೆಟ್ಟು ಓಣ್ಯೋಣಿ ತಿರಗೂಮುಂದ,ಟಿವಿ ಮುಂದ ಕೂತು ಸುಟ್ಟು ಸುಡುಗಾಡು ಸಿನೆಮಾ ನೋಡೂಮುಂದ,ಮೊಬೈಲ್ ನಾಗ ಕ್ಯಾಂಡಿಕ್ರಷ್ ,ಪಬ್ಜಿ ಆಡೂಮುಂದ ತಪ್ಪಿನೂ ಒಂದರೇಽ ಆಕಳಿಕಿ ಬಂದ್ರ ಕೇಳ್ರಿ.
ಸೂರ್ಯೋದಯಕ್ಕ ಮುಂಚೆ ಅರುಣನ ಆಗಮನ ಆಗೂಹಂಗ ನಿದ್ದಿ ಬರೂದರ ಮುನ್ಸೂಚನೆ ಈ ಆಕಳಿಕೆಗಳು ಅನ್ನಬಹುದು.ಆದ್ರ ಇದಕ್ಕ ತೀರ ವಿರುದ್ಧವಾಗಿ ಒಂದೊಂದುಸಲ ಮಧ್ಯಾಹ್ನಮೂರಮೂರು ತಾಸು ಮಲಕೊಂಡು ಎದ್ದಮ್ಯಾಲೂ ಒಂದರಹಿಂದ ಒಂದು ಹಂಗೇ ಸಾಲುಹಿಡದು ಬರತಿರತಾವ.ಕೆಲವೊಮ್ಮೆ ಬ್ಯಾಸರ ಆಗಿದ್ರನೂ ಬರತಾವ.ಕೆಲವೊಮ್ಮೆ ವಿಪರೀತ ದಣಿದಾಗ,ದೇಹ ಬಳಲಿದಾಗ ಬಂದ್ರ ಕೆಲವೊಮ್ಮೆ ಏನೂ ಕೆಲಸ ಇಲ್ಲದಽ ಸೋಮಾರಿಗಳಾಗಿ ಸೋಫಾದ ಮ್ಯಾಲೆ ಮೈ ಚೆಲ್ಲಿದಾಗನೂ ಬರತಾವ...ಅತೀ ಬ್ಯಾಸಗ್ಯಾಗ..ಅತೀ ಥಂಡ್ಯಾಗ....ಹೀಂಗs ಅಂತ ಹೇಳಲಿಕ್ಕೆ ಬರಂಗಿಲ್ರಿ .
ಯಾರರೇ ಪ್ರೀತಿಪಾತ್ರರು ಭೆಟ್ಟಿ ಆಗಿ ವಾಪಸ್ ಹೋದಾಗನೂ ಹೀಂಗಽ ಆಕಳಿಕಿ ಬರತಾವ.ಮೈತುಂಬ ,ಮನಿತುಂಬ ಕೆಲಸ ನೋಡಿ ತಲಿ ದಿಮ್ ಅಂದನೂ ಆಕಳಿಕಿ ಬರತಾವ.ಕೆಲವೊಮ್ಮೆ ಸುಮ್ಮೇ ನಮ್ಮ ಬಾಜೂಕಿನವರು ಆಕಳಿಸತಾರ ಅಂತ ನಮಗೂ ಆಕಳಿಕಿ ಬರತಾವ.ಇನ್ನ ಕೆಲವೊಮ್ಮೆ ಶಾಸ್ತ್ರೀಯ ಸಂಗೀತ ಕಾರ್ಯಕ್ರಮದಾಗ ,ಹರಿದಾಸರ ಹರಿಕಥಿಯೊಳಗ,ಸತ್ಯನಾರಾಯಣ ಕಥಿ ಅಂತಹ ದೀರ್ಘ ಪೂಜಾಕಥಿಗಳನ್ನು ಕೇಳೂಮುಂದ ಎಲ್ಲಿರತಾವೋ ಏನೋ ಓಡೋಡಿ ಬರತಾವ.ಅದಕ್ಕಽ ಅಂಥಾ ಕಾರ್ಯಕ್ರಮದಾಗೆಲ್ಲ ನಾ ಆದಷ್ಟು ಹಿಂದಿನ ಸೀಟೇ ಪ್ರಿಫರ್ ಮಾಡತೀನ್ರಿ.ನಂಗ ಈ ಪೂಜಾವಿಧಿಗಳೆಲ್ಲ ಝಟ್ ಪಟ್ ಅಂತ ಮುಗದ್ರ ಭಾಳ ಭಕ್ತಿ,ಏಕಾಗ್ರತೆ ಎಲ್ಲಾ ಇರತದರಿ.ಅದೇನರೆ ಅಧ೯ತಾಸಕಿಂತ ಜಾಸ್ತಿ ಇತ್ತೋ ....ಆಕಳಿಕಿ ಶುರುನೇ.ಸತ್ಯನಾರಾಯಣ ಪೂಜಾದ ಆ ಕಲಾವತಿ – ಲೀಲಾವತಿ ಕಥಿ ಕೇಳಕೋತ ಆಕಳಿಕಿ ಬಂದ್ರ ಒಳಗೊಳಗೇ ಪುಕಪುಕ ಆಗತಿರತದ್ರಿ.’ನನ್ನ ಕಥಿ ಕೇಳೂಮುಂದ ಆಕಳಿಸಿ ನನಗ ಅಪಮಾನ ಮಾಡಿದಿ’ ಅಂತ ಸತ್ಯನಾರಾಯಣ ಎಲ್ಲರೇಽ ಸಿಟ್ಟಿಗೆದ್ದು ಹಡಗಿನಲ್ಲಿದ್ದ ಧನಕನಕಗಳನ್ನು ಎಲಿ-ತೊಪ್ಪಲು-ಕಲ್ಲುಗಳನ್ನಾಗಿ ಪರಿವತ೯ನೆ ಮಾಡಿದ್ಹಂಗ ಇರೋ ಒಂದೆರಡು ನನ್ನ ಬಂಗಾರದೊಡವೆಗಳನ್ನುಹಿತ್ತಾಳೆಯನ್ನಾಗಿ,ಇರೋ ಒಂದೆರಡು ರೇಶ್ಮೆಸೀರೆಗಳನ್ನು ಹಳೆಯ ಹರಿದ ಸೀರೆಗಳನ್ನಾಗಿ ಮಾಡಿಬಿಟ್ಟ್ರ.....ಅಂತ ಗಾಭರಿ ಆಗತಿರತದ.ಆದ್ರ ಆ ಗಾಭರಿಗೆ ಇನ್ನೊಂದೆರಡು ಆಕಳಿಕೆ ಹೆಚ್ಚಿಗೆ ಬರತಾವು ನೋಡ್ರಿ...

ನಿಮಗೊಂದು ಮಜಾ ಸುದ್ದಿ ಗೊತ್ತೇನ್ರಿ? ತಾಯಿ ಗಭ೯ದಾಗಿರೋ ಮಗು ಸಹಿತ ಆಕಳಸತದಂತ.ವೈದ್ಯಕೀಯ ಶಾಸ್ತ್ರದ ಪ್ರಕಾರ ಅದು ಮೆದುಳಿನ ಒಳ್ಳೆಯ ಬೆಳವಣಿಗೆಯ ಲಕ್ಷಣ ಅಂತ.ಈ ಆಕಳಿಸೋ ಪ್ರಕ್ರಿಯೆ ಬರೇ ನಮ್ಮ ಮನುಷ್ಯ ಜಾತಿಯೊಳಗ ಅಲ್ರೀ...ಭಾಳಷ್ಟು ಪ್ರಾಣಿಗಳೊಳಗೂ ಅದ ಅಂತ.
ಇನ್ನ ಈ ಆಕಳಿಕೆಗಳಿಗೂ ಮತ್ತ ಪರೀಕ್ಷಾಗೂ ನೇರಾನೇರ ಸಂಬಂಧ ಅದನೋಡ್ರಿ.ಪರೀಕ್ಷಾ ಟೈಮದಾಗ ಕೈಯಾಗ ಪುಸ್ತಕ ಹಿಡದ್ರ ಸಾಕು ಆಕಳಿಕಿ ಶುರು..ನಂಗಂತೂ ಗಣಿತದ ಪ್ರಶ್ನೆಪತ್ರಿಕೆ ನೋಡಿದರ ಸಾಕು..ಅದರಾಗ ಎಷ್ಟು ಲೆಖ್ಖ ಮಾಡಲಿಕ್ಕೆ ಕೊಟ್ಟಾರೋ ಅದರ ದುಪ್ಪಟ್ಟು ಆಕಳಿಕೆ ಬರೂವರೀ.
ನಿಮಗೆಲ್ಲ ರಾಮಾಯಣದ ಕಥಿ ಗೊತ್ತೇ ಇರತದ.ಅದರಾಗ ನಮ್ಮಹನುಮಂತ ಲಂಕಾಪ್ರವೇಶ ಮಾಡೂಮುಂದ ಸುರಸಾ ಎಂಬ ರಕ್ಕಸಿಯ ಕಥಿ ಬರತದ.ನನ್ನ ಬಾಯಲ್ಲಿ ಪ್ರವೇಶಿಸಿ ಹೊರಬಂದರೆ ಮಾತ್ರ ನಿನಗೆ ಲಂಕಾಪ್ರವೇಶ ಅಂತ ಹೇಳಿದ ಅಕಿ ಆ ಅಂತ ಆಕಳಿಸತಾಳ.ಹನುಮ ತನ್ನ ಗಾತ್ರವನ್ನುಬೃಹದಾಕಾರವಾಗಿ ಬೆಳೆಸತಾನ.ಅದಕ್ಕ ತಕ್ಕಂಗ ‘ಆ’ಅಂತ ಬಾಯಿ ಅಗಲಿಸಿದ ಅಕಿನ ಬಾಯೊಳಗೆ ಹೋದ ಹನುಮ ತಕ್ಷಣವೇ ಪೂತಿ೯ ಸಣ್ಣವನಾಗಿ ಅಕಿ ಬಾಯಿ ಮುಚ್ಚುವುದರೊಳಗಾಗಿ ಹೊರಬಂದುಬಿಡುವ ಕಥಿ ಭಾಳ ಸ್ವಾರಸ್ಯಕರವಾಗೇದ.ಅಂದ್ರ ಜೀವನ-ಮೃತ್ಯುಗಳೆರಡೂ ಒಂದು ಆಕಳಕಿ ಅಳತೀ ಒಳಗಽ ಅವ ಅನ್ನೂ ತತ್ವ ನಮಗ ಅಥ೯ ಆಗತದ.
ಆಕಳಿಕಿ ಸುದ್ದಿ ಆತು..ಇನ್ನ ತೂಕಡಿಕಿ ಸುದ್ದಿನೂ ಒಂಚೂರು ಮಾತಾಡೇ ಬಿಡೂಣು.ಇವೆರಡೂ ಒಂಥರಾ ಅವಳಿ ಸೋದರರು ಇದ್ಹಂಗ. ಈ ತೂಕಡಿಕಿನೂ ಅಷ್ಟೇ ...ಯಾವ ಮಾಯದಾಗ ಬರತದೋ ಗೊತ್ತೇ ಆಗಂಗಿಲ್ಲರೀ.ಒಂಥರಾ ಗಾಢನಿದ್ದೆನೂ ಅಲ್ಲದ,ಎಚ್ಚರಿಕೆನೂ ಅಲ್ಲದ ಈ ತೂಕಡಿಕಿ ಮಜಾ ಅನುಭವಿಸಿದವರಿಗೇ ಗೊತ್ತು..ಎಷ್ಟೋ ಸಲ ಸಂತ್ಯಾಗ ತೂಕಡಿಸೋ ಮಂದಿನೂ ಇರತಾರ.ಕೆಲವು ಸಲ ನಮ್ಮ ಮನ್ಯಾಗ ಟಿವಿ ಜೋರ್ ದನಿ ತಗದು ಒದರತಿರತದ್ರಿ.ಅಡಿಗಿ ಮನ್ಯಾಗ ನನ್ನ ಮಿಕ್ಸಿ,ಕುಕ್ಕರ್ ಸೀಟಿ ಧಾಂಧಲೆ ನಡದಿರತದ.ನನ್ನ ಅವಳಿ ಮಕ್ಕಳದು ಯಾವುದೋ ಸಣ್ಣ ವಿಷಯಕ್ಕೆ ಜೋರ ಜಗಳ ನಡದಿರತದ.ಆದ್ರ ನಮ್ಮ ಮನಿಯವರು ಹಂಗಽ ಸೋಫಾಕ್ಕೊರಗಿ ತೂಕಡಿಸತಿರತಾರ. ಕೆಲವೊಬ್ಬರಿಗೆ ಈ ಗದ್ದಲದ ಬ್ಯಾಗ್ರೌಂಡ್ ನಾಗ ಭಾಳ ಛಂದ ನಿದ್ದಿ ಬರತದರಿ....ಪುಷ್ಪಕ ವಿಮಾನದ ಕಮಲಹಾಸನಗತೆ.ಈ ಬಸ್ಸು-ಟ್ರೇನುಗಳ ಪ್ರವಾಸ ಅಂತೂ ತೂಕಡಿಕೆಯ ತವರು ಎನ್ನಬಹುದು.ನಾ ಅಂತೂ ಎಷ್ಟೋ ಸಲ ಸಿಟಿ ಬಸ್ ನಾಗೂ ತೂಕಡಿಸಕೋತ ಓಡಾಡಿ ಎರಡೆರಡು ಸ್ಟಾಪ್ ದಾಟಿ ಇಳಿದ ಪ್ರಸಂಗಗಳೂ ಭಾಳ ಅವರೀ.ಎಷ್ಟೋ ಸಲ ನಮ್ಮ ಬಾಜೂಕ ಕೂತವರು ತೂಕಡಿಸಕೋತ ನಮ್ಮ ಮೈಮ್ಯಾಲ ತಮ್ಮ ಭಾರ ಹಾಕಿ ,ಎಷ್ಟೋ ಸಲ ನಾವು ತೂಕಡಿಸಕೋತ ಅವರ ಮ್ಯಾಲೆ ಜೋಲಿ ಹೊಡೆದು ಭಯಂಕರ ಮುಜುಗರದ ಪ್ರಸಂಗಗಳನ್ನೂ ಅನುಭವಿಸುವುದಾಗತದ.ಇನ್ನಽ ಎಷ್ಟೋ ಬಾಲಿವುಡ್ ಮೂವಿಗಳೊಳಗ ಹೀಂಗಽ ಬಸ್ ನಾಗ ತೂಕಡಿಸಿ ಹಿರೋನ ಹೆಗಲ ಮೇಲೆ ತಲೆಯಿಡೋ ಹಿರೋಯಿನ್ ,ಅವಳ ಹಾರಾಡುತ್ತಿರೋ ಮುಂಗುರುಳನ್ನು ನೇವರಿಸೋ ಹಿರೋ ..ಹಿನ್ನೆಲೆಯಲ್ಲಿ ಒಂದು ಹಾಡು...ಲವ್ ಸ್ಟೋರಿಗೆ ನಾಂದಿ ಆಗಿಬಿಡತದ್ರಿ ಈ ತೂಕಡಿಕಿ.
ಆದ್ರ ಎಷ್ಟೋ ಸಲ ಈ ತೂಕಡಿಕಿಯಿಂದ ಅವಘಡಗಳೂ ಆಗತಾವ.ರಾತ್ರಿ ಬಸ್ ಡ್ರೈವ್ ಮಾಡುತ್ತಿರುವ ಡ್ರೈವರ್ ತೂಕಡಿಸಿದರ ಮುಗೀತು..ಲಕ್ಷ್ಮಿ ರಮಣ ಗೋವಿಂದ..ನೈಟ್ ಡ್ಯೂಟಿ ಮಾಡುವ ನಸ್೯ ಡಾಕ್ಟರ್ ತೂಕಡಿಸಿದ್ರ ಪೇಶಂಟ್ ಗಳ ಗತಿ ಅಧೋಗತಿ.ತೂಕಡಿಸುತ್ತ ಮಗುವಿಗೆ ಹಾಲೂಡಿಸಿದ ತಾಯಿ...ಉಸಿರುಗಟ್ಟಿದ ಮಗು ಇಂಥವೆಲ್ಲ ಸುದ್ದಿಗಳನ್ನು ಆಗಾಗ ಕೇಳಕೋತನ ಇರತೀವಿ.ತೂಕಡಿಸಿಕೋತ ಕೂತ ಸೆಕ್ಯೂರಿಟಿ ಗಾಡ್೯ಗಳ ಮುಂದೆನೇ ಮನೆ ,ATM ಗಳ ಕಳ್ಳತನಗಳೂ ನಡೆಯುವುದುಂಟು.
ತೂಕಡಿಕಿ ಮಾತು ಬಂದಾಗ ನಮ್ಮ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಮರೆಯುವ ಹಾಗೆಯೇ ಇಲ್ಲ.ಸಭೆ -ಸಮಾರಂಭಗಳಲ್ಲಿ ,ಸದನದ ಕಲಾಪಗಳಲ್ಲಿ ಅವರು ತೂಕಡಿಸಿ ಸುದ್ದಿಯಾಗುವುದು ಸವೇ೯ಸಾಮಾನ್ಯವಾಗಿತ್ತು.ಅದಕ್ಕಽ ಬಲ್ಲವರು ‘ತೂಕಡಿಸಿ ತೂಕಡಿಸಿ ಬೀಳದಿರೋ ತಮ್ಮಾ ...ಓ ಮಂಕುತಿಮ್ಮಾ ‘ಅಂತ ಹಾಡಿರಬೇಕು.
ಏನ ಇರಲಿ ,ಮನಷಾ ಅಂದಮ್ಯಾಲೆ ದಿನಕ್ಕ ಒಮ್ಮೆರೆ ಆಕಳಿಸಲಾರದ,ತೂಕಡಿಸಲಾರದ ಇರಲಿಕ್ಕೆ ಆದೀತ?ಈಗ ಈ ಬರಹವನ್ನು ಓದಕೋತ ನೀವೆಲ್ಲಾರೂ ಅದೆಷ್ಟು ಸಲ ಆಕಳಿಸಿ..ತೂಕಡಿಸಿರತೀರೋ ಭಗವಂತಗಽ ಗೊತ್ತು.
ಇತಿ ಶ್ರೀ ಮಾನವೇತಿಹಾಸ ವತ೯ಮಾನ ಪುರಾಣೇ ಆಕಳಿಕಿ-ತೂಕಡಿಕಿ ಅಧ್ಯಾಯಂ ಸಂಪೂರ್ಣಂ..


~ ಗೌರಿಪ್ರಸನ್ನ

ನಿದ್ದೆಯೇ ಜೀವನದ ಹೆಗ್ಗುರಿ!

ಪ್ರಿಯ ಓದುಗರೆ
ಅನಿವಾಸಿಯ ಕಟ್ಟೆಯಲ್ಲಿ ಮತ್ತೊಮ್ಮೆ ಹರಟೆಯನ್ನು ಹೊಡೆಯುವ ಪ್ರಯತ್ನವನ್ನು ಮಾಡಿರುವೆ . ಕಟ್ಟೆ ಹಳೆಯದಾದರೇನು
ಹರಟೆಯ ವಿಷಯ ಮಾತ್ರ ಹೊಸದು . ರುಚಿಯಾದ ಊಟ , ಮಲಗಲು ಒಂದು ಹಾಸಿಗೆ , ಸವಿಯಾದ ನಿದ್ದೆ ಇದ್ದರೆ ಸ್ವರ್ಗಕ್ಕೆ
ಕಿಚ್ಚು ಹಚ್ಚೆಂದ - ಎಂದು ಸರ್ವಜ್ಞನು ಹೇಳಿರಬಹುದಾಗಿತ್ತೇನೋ ? ಇವು ಮೂರು ಯಾರಿಗೆ ಇಷ್ಟವಿಲ್ಲ? ಅದರಲ್ಲೂ
ಸವಿಯಾದ ನಿದ್ದೆಯಲ್ಲಿ ಸವಿಗನಸು ಕಾಣುವ ಮಜಾನೆ ಬೇರೆ . ನಿದ್ದೆಯ ಕುರಿತು ನನ್ನ ಪ್ರಾಥಮಿಕ ಶಾಲೆಯಿಂದ ಇಲ್ಲಿಯವರೆಗಿನ
ಅನುಭವಗಳು ವಿಶಿಷ್ಟವಾಗಿದ್ದು , ಆ ಘಟನೆಗಳ ನೆನಪುಗಳನ್ನು ಆಗಾಗ್ಗೆ ಮೆಲಕಿಸಿಕೊಂಡು , ನನ್ನಷ್ಟಕ್ಕೆ ನಾನೇ ಎಷ್ಟೋ ಸಲ
ನಕ್ಕಿದ್ದುಂಟು . ಆ ಮೆಲಕುಗಳನ್ನು ಹರಟೆಯ ರೂಪದಲ್ಲಿ ನಿಮ್ಮ ಮುಂದೆ ಇಡಲು ಪ್ರಯತ್ನಿಸಿರುವೆ .ಬನ್ನಿ ಸಾಧ್ಯವಾದರೆ ಓದಿ ,
ಹಾಗೆಯೇ ನಿಮ್ಮ ಅನಿಸಿಕೆಯನ್ನು ಗೀಚಲು ಮರೆಯದಿರಿ . ---- ಇಂತಿ ನಿಮ್ಮ ಸಂಪಾದಕ

“ಹೊಟ್ಟೆ ತುಂಬ ಊಟ ಮಾಡು , ಕಣ್ಣು ತುಂಬಾ ನಿದ್ದೆ ಮಾಡು ಆಯುಷ್ಯ ಘಟ್ಟಿಯಾಗುತ್ತೆ “ಎಂದು ವೈದ್ಯರು ಮತ್ತು ಹಿರಿಯರು
ಉಪದೇಶ ಮಾಡುವದು ಹೊಸದೇನು ಅಲ್ಲ . ಸರಿಯಾದ ಊಟ ಮತ್ತು ನಿದ್ದೆ ಉತ್ತಮ ಆರೋಗ್ಯಕ್ಕೆ ಮೂಲ ಮಂತ್ರ .ಆದರೆ
ಅವರವರ ಭಾವಕ್ಕೆ — ಅವರವರ ಮನಸಿಗೆ ತಕ್ಕಂತೆ , ಇದಕ್ಕೆ ತಮ್ಮದೇ ಆದ ಅರ್ಥವನ್ನು ಹುಡಿಕಿಕೊಂಡವರಿಗೆ ಏನೂ
ಕೊರತೆಯಿಲ್ಲ . ಕೆಲವರು ಬದುಕುವದಕ್ಕಾಗಿ ತಿನ್ನುವವರಿದ್ದರೆ ಇನ್ನು ಕೆಲವರು ತಿನ್ನುವದಕ್ಕಾಗಿಯೇ ಬದುಕುವದುಂಟು .
ಪರ್ಯಾಯವಾಗಿ ಕೆಲವರು ಬದಕುವದಕ್ಕಾಗಿ ನಿದ್ದೆ ಮಾಡಿದರೆ ಇನ್ನೂ ಕೆಲವರು ನಿದ್ದೆ ಮಾಡುವದಕ್ಕೆಂದೇ ಬದುಕುವದುಂಟು .
ಊಟ ಮಾಡುವ ಪರಿಯಲ್ಲಿ ಎಷ್ಟೊಂದು ವೈವಿಧ್ಯತೆ ಇದೆಯೋ ಹಾಗೆಯೇ ನಿದ್ದೆ ಮಾಡುವ ರೀತಿಯಲ್ಲೂ ವಿಭಿನ್ನ ವಿವಿಧತೆ ಉಂಟು .
ಮಲಗಿ ನಿದ್ದೆ ಮಾಡುವದು ಸಹಜವಾದರೂ , ಕೆಲವರು ಕುಳಿತಲ್ಲಿಯೇ ನಿದ್ದೆ ಮಾಡಿ ಖುಷಿ ಪಡುವದುಂಟು . ಇಷ್ಟೇ ಸಾಲದೆಂದು
ಇನ್ನು ಕೆಲವರು ನಿಂತು ನಿದ್ದೆ ಮಾಡಿದರೆ , ಕೆಲವರಂತೂ ಅಡ್ಡಾಡಿಕೊಂಡೇ ನಿದ್ದೆ ಮಾಡಿ ತಾವು ಎಲ್ಲರಿಗಿಂತಲೂ ವಿಭಿನ್ನವೆಂದು ತೋರಿಸುವದುಂಟು . ಒಟ್ಟಿನಲ್ಲಿ ನಾದಮಯಾ — ಅಲ್ಲಲ್ಲ ಕ್ಷಮಿಸಿ , ನಿದ್ದೆಮಯಾ —– ಈ ಲೋಕವೆಲ್ಲಾ .
ಅಚ್ಚು ಕಟ್ಟಾದ ಹಾಸಿಗೆಯ ಮೇಲೆ ತಮಗೆ ಅನುಕೂಲವಾದ ಭಂಗಿಯಲ್ಲಿ ಎಂದರೆ – ಅಡ್ಡಬಿದ್ದು , ಡಬ್ಬು ಬಿದ್ದು , ಚಿತ್ತ ಬಿದ್ದು
ಮಲಗುವವರು ಸಹಜವಾಗಿ ಸಿಗುತ್ತಾರೆ . ‘ಅಚ್ಚು ಕಟ್ಟಾದ ಹಾಸಿಗೆ’ ಯ ಪದವನ್ನು ಅವರವರ ಭಾವನೆಯಂತೆ
ಅರ್ಥೈಯ್ಯಿಸಬಹುದು . ಬಡವರಿಗೆ ನೆಲದ ಮೇಲಿನ ಚಾಪೆಯೇ ಅಚ್ಚು ಕಟ್ಟಾದರೆ , ಬಲ್ಲಿದರಿಗೆ ಅಲಂಕೃತ ಮಂಚ ಅಚ್ಚು
ಕಟ್ಟಾಗಬಹುದು . ದುರದೃಷ್ಟವಶಾತ್ ಕೆಲವು ಬಲ್ಲಿದರಿಗೆ ಮಂಚ ಇದ್ದರೂ ಬೊಜ್ಜಿನ ಬಾಧೆಯಿಂದಲೋ , ಸೊಂಟದ
ನೋವಿನಿಂದಲೋ ಚಾಪೆಯೇ ಗತಿಯಾಗುವದು ಬೇರೆ ವಿಷಯ ಬಿಡಿ . “ಹಲ್ಲಿದ್ದರೆ ಕಡಲೆ ಇಲ್ಲ , ಕಡಲೆಯಿದ್ದರೆ ಹಲ್ಲಿಲ್ಲ”
ಎಂಬುವದು ನಿಜ ತಾನೇ ?
ಕೆಲವರು ನಿಶ್ಚಿಂತೆಯಿಂದ ಶಾಂತವಾಗಿ ಮಲಗಿದರೆ ಇನ್ನೂ ಕೆಲವರು ಘೋರವಾದ ಗೊರಕೆಯನ್ನು ಹೊಡೆದು ಅಕ್ಕ ಪಕ್ಕದವರ ,
ಅಷ್ಟೇ ಏಕೆ ಮನೆ ಮಂದಿಯ ನಿದ್ದೆಯನ್ನೆಲ್ಲಾ ಹಾಳು ಮಾಡಿ ಸುಖ ಪಡುವದೂ ಉಂಟು . ಪತಿರಾಯನ ಗೊರಕೆಯ ಕಾಟವನ್ನು
ತಾಳದೆ , ಗೊರಕೆಯನ್ನು ತಡೆಯುವ ಎಲ್ಲ ಉಪಾಯಗಳು ವಿಫಲವಾದಾಗ , ‘ ಸಾಕಪ್ಪಾ ಈ ಮಹಾರಾಯಣ ಸಹವಾಸವೆಂದು
‘ವಿವಾಹ ವಿಚ್ಛೇದನೆಗೆ ಮೊರೆ ಹೋದ ಹೆಂಗಳೆಯರಿಗೇನೂ ಕಡಿಮೆಯಿಲ್ಲ .

ಮಲಗಿ ನಿದ್ದೆ ಮಾಡುವವರದು ಈ ಕಥೆಯಾದರೆ ಇನ್ನು ಕುಳಿತು ನಿದ್ದೆ ಮಾಡುವವರ ವಿಷಯವೇ ಬೇರೆ ಬಿಡಿ . ನಾನು ನಮ್ಮ ಹಳ್ಳಿಯ ಪ್ರಾಥಮಿಕ ಶಾಲೆಯ ಮೂರನೆಯ ಕ್ಲಾಸಿನಲ್ಲಿ ಓದುವಾಗ ‘ಮೂಲಿಮನಿ ‘ ಮಾಸ್ತರರು ಅಂತ ಇದ್ದರು (ಈಗಲೂ ಇದ್ದಾರೆ ). ಅಂಕಿ ಮಗ್ಗಿಯನ್ನೇನೋ ಚನ್ನಾಗಿ ಹೇಳಿಕೊಡುತ್ತಿದ್ದರು ಎನ್ನಿ ! ಆದರೆ , ಅಷ್ಟೇ ಚನ್ನಾಗಿ ತರಗತಿಯಲ್ಲಿ ನಿದ್ದೆಯನ್ನೂ ಹೊಡೆಯುತ್ತಿದ್ದರು ಎಂಬುವದು ವಿಶೇಷ ವಿಷಯ . ಅರ್ಧ ಘಂಟೆಯವರೆಗೂಒಂದರಿಂದ ಇಪ್ಪತ್ತರವರೆಗಿನ ಮಗ್ಗಿಗಳನ್ನು ನಮ್ಮೆಲ್ಲರ ಬಾಯಿಯಿಂದ ಸರತಿಯ ಮೇಲೆ ಒದರಿಸಿ , ಕೊನೆಯ ಹುಡುಗ ಇಪ್ಪತ್ತಇಪ್ಪತ್ತಲೇ ನಾಕನೂರೋ —- ಅಂತ ಮುಗಿಸುವದರೊಳಗೆನೇ ನಿದ್ದೆ ಹೋಗಿ ಬಿಡುತ್ತಿದ್ದರು . ಹಳ್ಳಿಯ ಶಾಲೆಗಳಲ್ಲಿ ಮಕ್ಕಳು ಮಗ್ಗಿಯನ್ನು ಹೇಳುವ ಪರಿ ರಾಗ ಹಚ್ಚಿ ಹಾಡು ಹೇಳಿದಂತೆ ಇರುತಿತ್ತು ( ಈಗ ಹೇಗಿದೆ ಎಂದು ಗೊತ್ತಿಲ್ಲ) . ಅದರ ಇಂಪಿಗೆನೇ ಇವರಿಗೆ ನಿದ್ದೆ ಬರುತಿತ್ತೇನೋ ? ಎಂಬುದು ನನ್ನ ಈಗಿನ ಒಂದು ಅನುಮಾನಿತ ಶಂಕೆ . ಮೂಲಿಮನಿ ಮಾಸ್ತರರು ಕುರ್ಚಿಯ ಮೇಲೆ ಕಾಲು ಮುದುರಿಸಿಕೊಂಡು ಕುಳಿತು ನಿದ್ದೆ ಹೊಡೆಯಲು ಪ್ರಾರಂಭಿಸಿದರೆ ಲಂಗು ಲಗಾಮು ಇಲ್ಲದ ನಮಗೆಲ್ಲಾ ಖುಷಿಯೋ ಖುಷಿ . ನಮ್ಮೆಲ್ಲರ ಗುದ್ದಾಟ , ಕಿರುಚಾಟ , ಪರಚಾಟ , ಜಗಳಾಟ ಮತ್ತು ಅಳಲಾಟ ಕುರುಕ್ಷೇತ್ರದ ಯುದ್ಧಕ್ಕಿಂತಲೂ ಭಯಂಕರವಾಗಿರುತಿತ್ತು . ಆದರೂ ಇದರ ಕಿಂಚಿತ್ತೂ ಪರಿವೆ ಇಲ್ಲದೆ ಮಾಸ್ತರರ ನಿದ್ದೆ ಮುಂದುವರೆಯುತ್ತಿತ್ತು .ಕುಂಭಕರ್ಣನನ್ನು ಎಬ್ಬಿಸಲು ಅವನ ಪ್ರಜೆಗಳೆಷ್ಟು ಹರಸಾಹಸ ಮಾಡುತ್ತಿದ್ದರು ಎಂಬುದು ಎಲ್ಲರಿಗೂ ಗೊತ್ತಿದ್ದ ವಿಷಯವೇ , ಆದರೆ ನಾವೆಲ್ಲಾ ಅವರೆಲ್ಲರಿಗಿಂತ ಬಹಳೇ ಮೇಲು ಇದ್ದಿದ್ದೀವಿ ಎನ್ನಿ . ನಮ್ಮ ನಿರಂತರ ಗಲಾಟೆಯಿಂದ ಒಂದರ್ಧ ಘಂಟೆಯಲ್ಲಿ ಮಾಸ್ತರರನ್ನು ಎಬ್ಬಿಸುವಲ್ಲಿ ಸಫಲವಾಗುತಿದ್ದೆವು ಎಂಬುದು ಹೆಮ್ಮೆಯ ವಿಷಯ . ನಿದ್ದೆಯಿಂದ ಎದ್ದ ಮಾಸ್ತರರು ಟೇಬಲ್ ಮೇಲೆ ಇರುತ್ತಿದ್ದ ಬಡಿಗೆಯನ್ನೊಮ್ಮೆ ಕುಟ್ಟಿ ಮತ್ತೆ ಮಗ್ಗಿಯ ಸರದಿಗೆ ಹೋಗುತ್ತಿದ್ದರು. ಕಳೆದ ಸಲ ನಮ್ಮೂರಿಗೆ ಹೋದಾಗ ಮಾಸ್ತರರನ್ನು ಮಾತಾಡಿಸಿಕೊಂಡು ಬರೋಣವೆಂದು ಅವರ ಮನೆಗೆ ಹೋಗಿದ್ದೆ . ಕುಶಲೋಪಹಾರಿ ಮಾತುಗಳೆಲ್ಲ ಮುಗಿದ ಮೇಲೆ ಅವರೆಂದರು. ” ಯಾಕೋ ಶಂಕ್ರಪ್ಪ , ನಿದ್ದೀನ ಬರವಲ್ಲದು ಯಾವುದಾದ್ರೂ ಗುಳಿಗಿಯಿದ್ದರ ಬರದಕೊಡ್ ” ಎಂದು .
ಅದಕ್ಕೆ ತಕ್ಷಣವೇ ನಾನಂದೆ ” ಗುರುಗೋಳ್ ಸಾಲ್ಯಾಗ ಇದ್ದಾಗ್ನ ನಿಮ್ಮ ಜನ್ಮ ಪೂರ್ತಿಯ ನಿದ್ದಿ ಮಾಡಿ ಮುಗಿಸಿ ಬಿಟ್ಟಿರಿ ಈಗ ಹ್ಯಾಂಗ್ ನಿದ್ದಿ ಬರಬೇಕು ?” ಎಂದು . ‘ ನಿನ್ನ ಕುಚೇಷ್ಟೆಯನ್ನು ಇನ್ನೂ ಬಿಟ್ಟಿಲ್ಲವೆಂದು’ ಬೈದುಕೊಂಡು ಹೋಗಿಬಿಟ್ಟರು .

ಇನ್ನು ಪ್ರಾಥಮಿಕ ಸಾಲಿ ಮುಗಿಸಿ ಮಾಧ್ಯಮಿಕ ಸಾಲಿಗೆ ಅಂತ ಬೈಲಹೊಂಗಲಕ್ಕೆ ಬಂದಾಗ ‘ಉಳ್ಳಾಗಡ್ಡಿ ‘ಅಂತ ಇಂಗ್ಲಿಷ್
ಮಾಸ್ತರರು ಸಿಕ್ಕಿದ್ದರು . ಅವರು ಕ್ಲಾಸಿನಲ್ಲಿ ನಿದ್ದೆ ಮಾಡುತ್ತಿರಲಿಲ್ಲ ಬದಲು ಸ್ಟಾಫ್ ರೂಮಿನಲ್ಲಿ ಕುಳಿತು ಗಡದ್ದಾಗಿ ನಿದ್ದೆ
ಹೊಡೆಯುತ್ತಿದ್ದರು . ಸುಮಾರು ಸಲ ಅವರಿಗೆ ಕ್ಲಾಸ್ ಇದ್ದದ್ದೇ ಗೊತ್ತಿರುತ್ತಿರಲಿಲ್ಲ . ನಾವೇ ಹೋಗಿ ಸೂಕ್ಷ್ಮ ಪ್ರಯತ್ನ ಮಾಡಿ
ಎಬ್ಬಿಸಿಕೊಂಡು ಬರುತ್ತಿದ್ದೆವು . ಕಣ್ಣು ತಿಕ್ಕುತ್ತಾ ಬಂದರೂ , ಇಂಗ್ಲಿಷಿನಿಂದ ಕನ್ನಡಕ್ಕೆ ಅನುವಾದ ಮಾಡಿ ಮಸ್ತ ಕ್ಲಾಸ್
ತೆಗೆದುಕೊಳ್ಳುತ್ತಿದ್ದರು . ಪಾಠ ಮುಗಿದ ಮೇಲೆ ನಮ್ಮನ್ನು ಕುರಿತು “ನಿಮಗೆಲ್ಲಾ ವಿದ್ಯೆಯೇ ಜೀವನದ ಹೆಗ್ಗುರಿಯಾಗಬೇಕು ” ಎಂದು
ಜೋರಾಗಿ ಹೇಳುತ್ತಿದ್ದರೆ , ಕಡೆಯ ಬೆಂಚಿನಲ್ಲಿ ಕುಳಿತ ಕಿಡಗೇಡಿಗಳು. ” ಸಾರ್ , ನಿದ್ದೆಯೇ ಜೀವನದ ಹೆಗ್ಗುರಿಯಾಗಬೇಕೆಂದು ” ಇನ್ನಷ್ಟು ಜೋರಾಗಿ ಕೂಗುತ್ತಿದ್ದರು .
ಇದೇನು ಬರೀ ಗುರುಗಳ ಬಗ್ಗೆ ಇಷ್ಟೊಂದು ಬರೆಯುತ್ತಿದ್ದೀನಿ ಅಂತ ಬೇಜಾರು ಮಾಡಿಕೊಳ್ಳಬೇಡಿ . ಶಿಷ್ಯರೂ ಯಾವುದರಲ್ಲು
ಕಡಿಮೆ ಇಲ್ಲ . ‘ ಗುರುವಿನ ಗುಲಾಮನಾಗುವತನಕ ದೊರೆಯದಣ್ಣ ಮುಕುತಿ ‘ ಅಂತ ದಾಸರು ಹೇಳಿಲ್ಲವೆ ? , ‘ಶಿಷ್ಯನು ಗುರುವನ್ನು
ಮೀರಿಸಬೇಕೆಂದು’ ಎಷ್ಟೋ ಕಥೆಗಳಲ್ಲಿ ಸಾರಿಲ್ಲವೆ ? ಇದನ್ನು ಕಾಯಾ , ವಾಚಾ , ಮನಸಾ ಅಂತ ಪೂರೈಸುವ ಶಿಷ್ಯರ
ಗುಂಪೂ ಬಹಳ ದೊಡ್ಡದುಂಟು .ಎಲ್ಲ ಕಾಲೇಜುಗಳ ಕೊಠಡಿಯ ಕೊನೆಯ ಬೆಂಚಿನಲ್ಲಿ ಈ ಗುಂಪು ಸಹಜವಾಗಿ ಸಿಗುವದುಂಟು .
ನಾನೂ ಒಬ್ಬ ಆ ಗುಂಪಿನ ಸದಸ್ಯನೆಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ ( ನಿಜವಾಗಿಯೂ ?). ಕರ್ನಾಟಕ ಕಾಲೇಜಿನಲ್ಲಿ ಪಿ
ಯು ಸಿ ಓದುತ್ತಿರುವಾಗಿನ ಸಂದರ್ಭ . ಲಿಬರಲ್ ಹಾಸ್ಟೆಲಿನಲ್ಲಿದ್ದ ನಾವು ಎಂಟು ಜನ ಹುಡುಗರು ಬೆಳಿಗ್ಗೆ ಒಂಭತ್ತೂವರೆಗೆ ,
ಮೆಸ್ಸಿನಲ್ಲಿ ಹೊಟ್ಟೆತುಂಬ ತಿಂದು ಹತ್ತು ಘಂಟೆಗೆ ಕಾಲೇಜಿಗೆ ಹೋಗುತ್ತಿದ್ದೆವು . ಮೊದಲನೆಯದು ಇಂಗ್ಲಿಷ್ ಕ್ಲಾಸು . ಪ್ರೊಫೆಸರ್
ಮುಳಗುಂದ ಅವರು ‘ಚಾರ್ಲ್ಸ್ ಡಿಕ್ಷನ್ನ ‘ನ ‘ Great expectations’ ಕಾದಂಬರಿಯನ್ನು ಭಾವಪೂರ್ವಕವಾಗಿ ಚಿತ್ರಿಸುತ್ತಿದ್ದರೆ ,ಕೊನೆಯ ಬೆಂಚಿನಲ್ಲಿ ಕುಳಿತ ನಾವು ನಿದ್ರಾಲೋಕದಲ್ಲಿ ಮುಳುಗಿ ನಮ್ಮದೇ ಆದ ಹಗಲು ಕನಸು ಕಾಣುತ್ತಿದ್ದೆವು . ಕೊನೆಗೊಂದು
ದಿನ ಪ್ರೊಫೆಸ್ಸರ್ ನಮ್ಮನ್ನೆಲ್ಲ ತಮ್ಮ ಕಚೇರಿಗೆ ಕರೆದು ” ನೀವು ನಿದ್ದೆ ಮಾಡದೆ ನನ್ನ ಪಾಠವನ್ನು ಕೇಳುತ್ತೀರಿ ಎಂಬುದೇ ನನ್ನ
great expectations ಎಂದು ಛಿ ಮಾರಿ ಹಾಕಿ ಕಳುಹಿಸಿದ್ದರು .
‘ ತಿಂದ ತಕ್ಷಣವೇ ನಿದ್ದೆ ‘ ಎಂದಾಗ ನನ್ನ ಸ್ನಾತಕೋತರ ಪದವಿಯ ಗೆಳೆಯನೊಬ್ಬನದು ನೆನಪಾಯಿತು ನೋಡಿ . ನಾವು
ತರಬೇತಿಯಲ್ಲಿ ಇದ್ದಾಗ ಮಧ್ಯಾಹ್ನದಲ್ಲಿ ಊಟಕ್ಕೆಂದು ಅಬ್ಬಬ್ಬಾ ಎಂದರೆ ಅರ್ಧ ಘಂಟೆ ಸಮಯವಿರುತ್ತಿತ್ತು , ಸುಮಾರು ಐದು
ನಿಮಿಷಿನಲ್ಲಿ ಗಬಗಬನೆ ತಿಂದು , ಮಿಕ್ಕಿದ ಇಪ್ಪತ್ತು ನಿಮಿಷ ಅವನು ಎಲ್ಲೋ ಮಾಯವಾಗಿ ಬಿಡುತ್ತಿದ್ದ . ಕುತೂಹಲಕ್ಕೆಂದು
ಅವನನ್ನು ಹಿಂಬಾಲಿಸಿದಾಗ ಗೊತ್ತಾಗಿತ್ತು – ಅವನು ಪಕ್ಕದ ಕೋಣೆಯೊಂದರಲ್ಲಿ ಕುಳಿತು ಸಣ್ಣ ನಿದ್ದೆ ಮಾಡಿ ಬರುತ್ತಿದ್ದ .
ಇವರೇನೂ ಅಪರೂಪವಲ್ಲ ಬಿಡಿ , ಎಲ್ಲೆಲ್ಲೋ ಕಾಣಿಸುವವರೆ . ಇದನ್ನೇ ಇಂಗ್ಲೀಷಿನಲ್ಲಿ ಸ್ಟೈಲಿಶ್ ಆಗಿ ‘ ನ್ಯಾಪ್ ‘ ಅಂತ ಕರೆಯುವದುಂಟು ತಾನೆ ? ಪಾಪ ! ಹೊಟ್ಟೆಯ ತಪ್ಪೋ ಅಥವಾ ನಿದ್ಧೆಯ ತಪ್ಪೋ ಒಂದೂ ಗೊತ್ತಿಲ್ಲ .

ಇನ್ನು , ನಿಂತು ನಿದ್ದೆ ಮಾಡುವವರನ್ನು ನೀವು ಕಂಡಿರದೆ ಇರಬಹುದು . ಇಂಥವರು ಭರ್ಜರಿಯಾಗಿ ತುಂಬಿದ ಬಸ್ಸುಗಳಲ್ಲಿ
ಸಹಜವಾಗಿ ಸಿಗುವದುಂಟು . ನಮ್ಮೂರಿನಿಂದ ಪಟ್ಟಣಕ್ಕೆ ಸಂತೆಯ ದಿನದಂದು ಹೋಗುವ ಬಸ್ಸು ಯಾವಾಗಲೂ ಕಿಕ್ಕಿರಿದು ತುಂಬಿರುತ್ತಿತ್ತು . ನಮ್ಮ ಕಟುಕರ ಕಮಾಲಸಾಬನು ಖಾಯಮ್ ಪ್ರಯಾಣಿಕನಾಗಿದ್ದರೂ , ಧಡೂತಿ ಶರೀರವಿರುವದರಿಂದ ಬೇಗನೆ ಬಸ್ಸಿನಲ್ಲಿ ನುಗ್ಗಲಾರದೆ ಯಾವಾಗಲೂ ಕುಳಿತುಕೊಳ್ಳಲು ಸೀಟು ಸಿಗಲಾರದೆ ಒದ್ದಾಡುತ್ತಿದ್ದನು . ಪಾಪ !! ರಾತ್ರಿಯಲ್ಲ ಏನು
ಮಾಡಿರುತ್ತಿದ್ದನೋ ಕಾಣೆ , ಆದರೆ ಬಸ್ಸಿನಲ್ಲಿ ಏರಿದ ಮೇಲೆ ಮಾತ್ರ ನಿಂತುಕೊಂಡೆ ನಿದ್ದೆ ಹೊಡೆಯಲು ಪ್ರಾರಂಭಿಸುತ್ತಿದ್ದನು.
ತೂಗಾಡಿಕೆಯಲ್ಲಿ ಅವನ ಶರೀರದ ಮುಕ್ಕಾಲು ಭಾರ ಸೀಟಿನಲ್ಲಿ ಕುಳಿತವರ ಮೇಲೆ ಬೀಳುತ್ತಿತ್ತು . ಇವನ ಕಾಟವನ್ನು
ತಾಳಲಾರದೆ , ಬೈಯ್ಯಲೂ ಮನಸಿರಲಾರದೆ , ಕುಳಿತವರೆ ಎದ್ದು ಇವನಿಗೆ ತಮ್ಮ ಸೀಟು ಕೊಟ್ಟು ಕೃತಾರ್ಥರಾಗುತ್ತಿದ್ದರು .
ಅಂತು ಇಂತು ಕೊನೆಗೂ ಸೀಟು ಗಿಟ್ಟಿಸುತ್ತಿದ್ದ ಎನ್ನಿ .

ಇವರದೆಲ್ಲಾ ಒಂದು ಪಂಗಡವಾದರೆ ಇನ್ನೊಂದನ್ನು ವಿಭಿನ್ನ ಪಂಗಡವೆಂದೇ ಪರಿಗಣಿಸಬಹುದು , ಅದುವೇ ನಡೆದಾಡಿಕೊಂಡು
ನಿದ್ದೆ ಮಾಡುವವರ ಅಥವಾ ನಿದ್ದೆಯಲ್ಲಿ ನಡೆದಾಡುವವರ ಪಂಗಡ . ಈ ಪಂಗಡದ ಸದಸ್ಯರನ್ನು ಸ್ವತಃ ನೋಡಿರುವವರಕ್ಕಿಂತಲೂ ಅವರ ಬಗ್ಗೆ ಓದಿದವರೆ ಹೆಚ್ಚು ಇರಬಹುದು ಎಂಬುವದು ನನ್ನ ಅನಿಸಿಕೆ .
ನಾನು ಕೆಎಂಸಿ ಯಲ್ಲಿ ಕಲಿಯುತ್ತಿದ್ದಾಗ , ನನ್ನ ಖಾಸಾ ದೋಸ್ತ ‘ಮಂಜು’ ಹುಬ್ಬಳ್ಳಿಯ ಬಿ ವ್ಹಿ ಬಿ ಕಾಲೇಜಿನಲ್ಲಿ ಇಂಜಿನಿಯರಿಂಗ್
ಓದುತ್ತಿದ್ದ . ಅವನು ನಿದ್ದೆಯಲ್ಲಿ ಅಡ್ಡಾಡುತ್ತಿದ್ದಾನೆ ಎಂದು ಹೆದರಿಕೊಂಡು ಅವನ ರೂಮ್ಮೇಟ್ ಕೊಠಡಿಯನ್ನು ಬದಲಿಸಿದ್ದು ತಿಳಿದು ನನಗೆ ಬೇಜಾರವು ಹಾಗೆಯೇ ಕುತೂಹಲವೂ ಆಗಿತ್ತು . ಅದೊಂದು ದಿನ ನೋಡಿಯೇ ಬಿಡೋಣವೆಂದು ನಿರ್ಧರಿಸಿ ,
ಧೈರ್ಯತುಂಬಿಕೊಂಡು ಅವನ ಕೊಠಡಿಯಲ್ಲಿ ಮಲಗಲು ಹೋಗಿದ್ದೆ . ವಿಷಯ ನನ್ನ ಬೇರೆ ದೋಸ್ತಗಳಿಗೆ ಗೊತ್ತಾಗಿ ” ಲೇ ಸುಮ್ಮ್ನ
ವಾಪಸ್ ಹೋಗಿ ಬಿಡು , ಇಲ್ಲಂದ್ರ ನಡು ರಾತ್ರ್ಯಾಗ ಓಡಿ ಹೋಗತಿ ನೋಡ್ ಮಗನ ” ಅಂತ ಬೆದರಿಕೆಯ ಮಾತುಗಳನ್ನು
ಆಡಿದ್ದರು . ಆದರೂ ಅವರ ಮಾತುಗಳಿಗೆ ಬೆಲೆ ಕೊಡದೆ ಅವನ ಕೊಠಡಿಯಲ್ಲಿ ಮಲಗುವ ಸಾಹಸವನ್ನು ಮಾಡಿ ಬಿಟ್ಟಿದ್ದೆ . ಗಾಢ ನಿದ್ದೆಯಲ್ಲಿದ್ದ ಮಂಜು , ನಡು ರಾತ್ರಿಯಲ್ಲಿ ಕೋಣೆಯ ಬಾಗಿಲು ತೆಗೆದು ಹೊರಗೆ ಹೊರಟೇ ಬಿಟ್ಟಿದ್ದ . ಭಯವಾದರೂ ಕುತೂಹಲದಿಂದ ಅವನನ್ನೆ ಹಿಂಬಾಲಿಸಿದ್ದೆ . ನಿದ್ದೆಯಲ್ಲಿ ನಡೆಯುತ್ತ ನಡೆಯುತ್ತಾ ಅವನು ಎದುರುಗಡೆಯಿದ್ದ ಸ್ಮಶಾನದ ಜಾಗವನ್ನು ಪ್ರವೇಶಿಸಿದಾಗ ನನಗೆ ಧೈರ್ಯಸಾಲದೆ ವಾಪಸು ಓಡಿ ಬಂದಿದ್ದೆ . ಮನುಷ್ಯನ ಮೆದಳು ನಿದ್ದೆಯಲ್ಲಿಯೂ
ಇಷ್ಟೊಂದು ಅಚ್ಚು ಕಟ್ಟಾಗಿ ಹೇಗೆ ಕೆಲಸ ಮಾಡುತ್ತದೆ ಎಂಬುದು ನನಗೆ ಇನ್ನೂ ಒಗಟಾಗಿರುವ ವಿಷಯ . ಮಂಜುನಾಥನ
ಆಶೀರ್ವಾದದಿಂದ ಮಂಜು ಈಗ ನಿದ್ದೆಯಲ್ಲಿ ನಡೆಯುವದನ್ನು ಬಿಟ್ಟಿದ್ದಾನೆಂದು ಅವನ ಶ್ರೀಮತಿಯವರಿಂದ ತಿಳಿದು
ಸಂತೋಸವಾಯಿತು ಎನ್ನಿ .

ಈ ನಿದ್ದೆಯ ಪುರಾಣ ಇಷ್ಟಕ್ಕೆ ಮುಗಿಯುವದಿಲ್ಲ ಬಿಡಿ . ‘ ಅತಿ ‘ ಎಂಬುವದಕ್ಕೆ ‘ ಮಿತಿ ‘ ಅಂತ ವಿರುದ್ಧ ಪದವಿರುವದು ನಿಜ .
ಹಾಗೆಯೆ ಅತಿಯಾಗಿ ನಿದ್ದೆಮಾಡುವವರು ಒಂದೆಡೆ ಇದ್ದರೆ , ಇನ್ನು ನಿದ್ದೆ ಬರದೆ ಒದ್ದಾಡುವವರು ಇನ್ನೊಂದೆಡೆ ಇರಲೇಬೇಕಲ್ಲವೆ ? ನಿದ್ದೆ ಬಾರದೆ ಪರಿತಪಿಸುವ ಬಹು ಜನರು ಮನಬಂದಂತೆ ಪರಿಶೋಧನೆ ನಡೆಸಿ , ತಮಗೆ ತಕ್ಕ ಹವ್ಯಾಸಗಳನ್ನು
ಬೆಳೆಸಿಕೊಳ್ಳುವದು ಸಹಜ . ಹವ್ಯಾಸ ಒಳ್ಳೆಯದೊ ಕೆಟ್ಟದ್ದೊ ಬೇರೆ ವಿಷಯ ಬಿಡಿ .
ಅಂತೂ ‘ ಮನಸಿದ್ದರೆ ಮಾರ್ಗ ‘ಎಂದು ಅಂಬುವದರಲ್ಲಿ ಅವರಿಗೆ ನಂಬಿಕೆ ಇರುವದು ಶ್ಲಾಘನೀಯ . ನಿದ್ದೆ ಬರಲೆಂದು
ಸೋಮಾರಿಗಳು ಕೂಡ ತಾಸು ಗಂಟಲೇ ‘ ವಾಕಿಂಗ್ ‘ ಮಾಡುವದಕ್ಕೆ ಮತ್ತು ಪುಸ್ತಕಗಳ ಮುಖವನ್ನೇ ನೋಡದವರು
ಮೂಟೆಗಂಟಲೇ ಪುಸ್ತಕಗಳನ್ನು ಖರೀದಿಸಿ ಓದಲು ಪ್ರಾರಂಭಿಸುವದಕ್ಕೆ ಈ ನಿದ್ದೆರಾಯನೇ ಕಾರಣ ಎಂಬುದೊಂದು ನೆಮ್ಮದಿಯ
ಸಂಗತಿ . ಅದಕ್ಕಾದರೂ ಅವನಿಗೊಂದು ಧನ್ಯವಾದವನ್ನು ಹೇಳಲೇ ಬೇಕಲ್ಲವೆ ?
ಒಟ್ಟಿನಲ್ಲಿ ನನ್ನ ಮಾಧ್ಯಮಿಕ ಶಾಲೆಯ ಕಿಡಿಗೇಡಿ ಗೆಳೆಯರು ಹೇಳಿದಂತೆ , ಒಂದಿಲ್ಲ ಒಂದು ರೀತಿಯಲ್ಲಿ ಬಹು ಜನರಿಗೆ ‘ನಿದ್ದೆಯೇ ಜೀವನದ ಹೆಗ್ಗುರಿ ‘ ಯಾಗಿರುವದು ಮಾತ್ರ ನಿಜ ಸಂಗತಿ . ನೀವೇನು ಅನ್ನುತ್ತೀರಿ ?
ಹರಟೆಯ ನೆಪದಲ್ಲಿ ನನ್ನಿಂದ ಇಷ್ಟೊಂದು ಕೊರೆಯಿಸಿಕೊಂಡ ಮೇಲೆ , ತಾಳ್ಮೆಯಿಂದ ಓದಿದವರಿಗೆಲ್ಲ ಕಣ್ಣು ತುಂಬಾ ನಿದ್ದೆ ಬರುತ್ತದೆ ಎಂದು ಬಲವಾಗಿ ನಂಬಿರುವೆ.

—– ಶಿವಶಂಕರ ಮೇಟಿ