ಕೈ ಹಿಡಿದು ನಡೆಸಿದ ಗುರುವಿನ ಕುರಿತು..

ಎಲ್ಲರಿಗೂ ನಮಸ್ಕಾರ,
ನಾನು ಇಂದು ಬರೆಯುತ್ತಿರುವುದು, ನನ್ನ ಪ್ರೀತಿಯ ಗುರುಗಳಾದ ಡಾ. ಶಾಲಿನಿ ರಘುನಾಥ್ ಅವರ ಕುರಿತು. ಡಾ. ಶಾಲಿನಿ ರಘುನಾಥ್ ಅವರು
ನಮ್ಮ ಕನ್ನಡ ನಾಡಿನ ಹೆಸರಾಂತ ಜಾನಪದ ವಿದ್ವಾಂಸರು. ಭಾಷಾ ವಿಜ್ಞಾನದಲ್ಲಿ ಹಲವು ಸಂಶೋಧನಾತ್ಮಕ ಕೃತಿಗಳನ್ನು ರಚಿಸಿದ್ದಾರೆ.
ಜಾನಪದ ಸಂಶೋಧನೆ ಮತ್ತು ಸಂಗ್ರಹಕಾರ್ಯದಲ್ಲೂ ಅವರು ತಮ್ಮ ವಿಶೇಷ ಛಾಪು ಮೂಡಿಸಿದ್ದಾರೆ. ತಮ್ಮ ಉದ್ಯೋಗವನ್ನು ತಪಸ್ಸಿನಂತೆ
ಮಾಡಿ, ಸಾವಿರಾರು ವಿದ್ಯಾರ್ಥಿಗಳಿಗೆ ಅಧ್ಯಯನದ ರುಚಿ ಹತ್ತಿಸಿದವರು. ಕಲಿತ ವಿದ್ಯೆಯನ್ನು ಬದುಕಿಗೆ ಅಳವಡಿಸಿಕೊಂಡು ನಿರಂತರವಾಗಿ ಚಿಂತನೆ ಮಾಡುವ ಹಾದಿಯಲ್ಲಿ ನನ್ನನು ಕೈಹಿಡಿದು ನಡೆಸಿದವರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಅವರ ವಿದ್ಯಾರ್ಥಿಯಾಗಿ ನಾನು
ಕಳೆದ ಎರಡು ವರ್ಷಗಳು ಆ ನಂತರದ ಈ 14 ವರ್ಷಗಳೂ ನನ್ನನು ಅದೇ ಕಲಿಕೆಯ ಹಾದಿಯಲ್ಲಿಟ್ಟಿವೆ. ಅಂತಹ ಗುರುವಿನ ಜೊತೆಗೆ ನನ್ನ ಒಡನಾಟದ ಕುರಿತು ನನ್ನ ಈ ಲೇಖನ.
- ಅಮಿತಾ ರವಿಕಿರಣ್
ಚಿತ್ರಕೃಪೆ; ಗೂಗಲ್
ಪದವಿಯು ಮುಗಿದು ನಾಲ್ಕು ವರ್ಷಗಳ ಧೀರ್ಘ ಅಂತರದ ನಂತರ ಮತ್ತೆ ಕಾಲೇಜ್ ಸೇರಿಕೊಳ್ಳುವ ಸುಯೋಗ ಬಂದಿತ್ತು ಕಲಿಯಬೇಕೆಂಬ ಆಸೆ
ಇತ್ತಾದರೂ ಅದನ್ನು ಆಚರಣೆಗೆ ಹೇಗೆ ತರುವುದು ಎಂಬುದು ತಿಳಿದಿರಲಿಲ್ಲ. ಪದವಿ ಪಡೆದಿದ್ದು ಸಂಗೀತದಲ್ಲಿ ಆದರೆ ಸ್ನಾತಕೋತ್ತರ
ಅಧ್ಯಯನವನ್ನು ಸಂಗೀತದಲ್ಲೇ ಮುಂದುವರಿಸುವ ಮನಸ್ಸಿರಲಿಲ್ಲ ಸಂಗೀತ ಬಿಡುವ ಮನಸ್ಸು ಇರಲಿಲ್ಲ. ಈ ನಡುವೆ ಅತಿಯಾಗಿ ನನ್ನ ಮನಸನ್ನ
ಆವರಿಸಿದ್ದ ವಿಷಯ ಜಾನಪದ. ಆಗ ನನಗೆ ಜನಪದ ಜಾನಪದ ದ ನಡುವಿನ ವ್ಯತ್ಯಾಸವು ತಿಳಿದಿರಲಿಲ್ಲ.
ನನ್ನ ದನಿ ಕೇಳಿದ ಹಲವು ಮಂದಿ ಜನಪದ ಸಂಗೀತವನ್ನು ಮುಂದುವರಿಸಿಕೊಂಡು ಹೋಗು ಎಂದು ಹೇಳುತ್ತಿದ್ದರು ಮತ್ತು ಯಾವ
ಕಾರ್ಯಕ್ರಮಕ್ಕೆ ಹೋದರೂ ಜಾನಪದ ಗೀತೆಗಳನ್ನು ಹಾಡು ಎಂಬ ಅಪೇಕ್ಷೆ ಮುಂದಿಡುತ್ತಿದ್ದರು. ಆ ಒಂದು ಹಿನ್ನೆಲೆಯಲ್ಲಿ ಜನಪದ ಸಂಗೀತದ
ಬಗೆಗೆ ಏನಾದರು ಹೆಚ್ಚಿನದ್ದು ಕಲಿಯಬೇಕು ಎಂಬ ಸ್ಪಷ್ಟ ಉದ್ದೇಶದೊಂದಿಗೆ ನಾನು ಜಾನಪದ ಅಧ್ಯಯನ ಪೀಠದ ಹೊಸ್ತಿಲನ್ನು ತುಳಿದಿದ್ದೆ.

ಆ ದಿನ ನಮ್ಮ ಪ್ರವೇಶ ಪ್ರಕ್ರಿಯೆ ಆರಂಭವಾದ ದಿನ. ನಾನು ಮೊದಲ ಬಾರಿ ಶಾಲಿನಿ ಮೇಡಂ ಅವರನ್ನು ನೋಡಿದ್ದು ಹಸಿರು ಕೆಂಪಂಚಿನ
ಧಾರವಾಡ ಸೀರೆಯಲ್ಲಿ ನಗು ಮೊಗದಿಂದ ವಿದ್ಯಾರ್ಥಿಗಳನ್ನು ಮಾತನಾಡಿಸುತ್ತಿದ್ದರು. ಅದೆಷ್ಟು ಸರಳತೆಯಿಂದ ಅವರು ನಮ್ಮೊಂದಿಗೆ
ಮಾತನಾಡಿದ್ದರೆಂದರೆ, ಅವರು ಅಧ್ಯಯನ ಪೀಠದ ಅಧ್ಯಕ್ಷೆ ಎಂಬುದು ನನಗೆ ತಿಳಿಯಲೇ ಇಲ್ಲ.
ಅಡ್ಮಿಷನ್ ಆಗಿ ಮನೆಗೆ ಹೋದಾಗ ಅದೇ ತಿಂಗಳ ಕಸ್ತೂರಿ ಮಾಸಪತ್ರಿಕೆಯಲಿ ಭಾಷಾ ಶಾಸ್ತ್ರ ಕುರಿತಾದ ಒಂದು ಲೇಖನದಲ್ಲಿ ಅವರ ಹೆಸರು
ಉಲ್ಲೇಖಿಸಲಾಗಿತ್ತು. ಅವರಲ್ಲಿರುವ ಅಪರೂಪದ ಪುಸ್ತಕ ಸಂಗ್ರಹದ ಬಗ್ಗೆ ಲೇಖಕ ತುಂಬಾ ಚನ್ನಾಗಿ ಬರೆದಿದ್ದರು. ಅವರೇ ಇವರು ಎಂದು
ತಿಳಿದಾಗ ಮನಸ್ಸು ಸಂಭ್ರಮಿಸಿತ್ತು.

ಕಾಲೇಜ್ ಶುರುವಾದ ನಂತರ ನಾವು ಅವರನ್ನು ಭೇಟಿ ಮಾಡಲು ಅವರ ಚೇಂಬರ್ ಗೆ ಹೋದಾಗ ಅವರು ಮಾತನಾಡಿದ ಶೈಲಿ, ಅವರ
ಆತ್ಮೀಯತೆ ನನ್ನ ಶಿಕ್ಷಣ ಮುಂದುವರಿಸುವ ಕುರಿತು ಇದ್ದ ಹಲವು ದುಗುಡ ಕಡಿಮೆ ಮಾಡಿದ್ದವು. ಜೊತೆಗೆ ಅಷ್ಟೇ ಕಳಕಳಿಯಲ್ಲಿ ಹೇಳಿದ್ದರು.
ಜಾನಪದವನ್ನು ಸುಲಭ , ಡಿಗ್ರಿ ಮುಗಿಸಲು ಒಂದು ಸರಳ ವಿಷಯ ಎಂಬ ಭಾವನೆ ಸಾಮಾನ್ಯ. ಮತ್ತು ಅಧ್ಯಯನ ಪೀಠಕ್ಕೆ ಬರುವ ಹಲವರಲ್ಲಿ
ಈ ಆಲೋಚನೆಯೇ ಇರುತ್ತದೆ ಆದರೆ ನೀವು ಅದನ್ನು ನಿಜಕ್ಕೂ ಇಷ್ಟಪಟ್ಟು ಅಭ್ಯ್ಯಸಿಸಿ ಏನಾದರು ಹೊಸ ದಿಶೆಯಲ್ಲಿ ಆಲೋಚಿಸಬೇಕು. ಬರೀ
ಜಾಬ್ ಗಿಟ್ಟಿಸಲು ಒಂದು ಡಿಗ್ರಿ ಅಂದುಕೊಳ್ಳದೆ ಪ್ರೀತಿಯಿಂದ ಅಧ್ಯಯನ ಶುರು ಮಾಡಿ, ಎಲ್ಲಿ ನೋಡಿದರೂ ನಿಮಗೆ ಜನಪದವೇ ಕಾಣಬೇಕು. ಈ
ವಿಷಯವನ್ನು ಮನದಟ್ಟು ಮಾಡಿಕೊಂಡೆ ಕ್ಲಾಸಿಗೆ ಬನ್ನಿ ಮತ್ತು ತರಗತಿಗಳನ್ನು ತಪ್ಪಿಸಬೇಡಿ ಅಂದರು.

ಮೊದಲ ಸೆಮಿಸ್ಟರ್ ನಲ್ಲಿ ಜಗತ್ತಿನ ಜಾನಪದ ಇತಿಹಾಸ ಎಂಬ ವಿಷದೊಂದಿಗೆ ಮೇಡಂ ಮೊದಲಬಾರಿ ನಮ್ಮ ಮುಂದಿದ್ದರು , ಯುರೋಪ್
ಅಮೇರಿಕ ಮತ್ತು ರಷ್ಯ ಭಾರತದ ಜನಪದ ಇತಿಹಾಸವನ್ನು ಹೇಳುವುದರೊಂದಿಗೆ ಇತಿಹಾಸ ಓದುವುದು ನಮ್ಮ ವರ್ತಮಾನಕ್ಕೆ ಹೇಗೆ
ಉಪಯೋಗಕಾರಿ ? ಅನ್ನುವ ವಿಷಯವನ್ನು ಅದೆಷ್ಟೋ ಉದಾಹರಣೆಗಳೊಂದಿಗೆ ವಿವರಿಸಿದ್ದರು ಅದರಲ್ಲೂ ಎಂದೋ ಕಳೆದು ಹೋದ ಫಿನ್ಲ್ಯಾಂಡ್
ನ ಕಲೆವಾಲ್ ಎಂಬುವ ಕಥನಗೀತೆಯನ್ನು ಸಂಪಾದಿಸಿದ ರೀತಿ ಅದು ಅಲ್ಲಿನ ಜನಮಾನಸದ ಮೇಲೆ ಬೀರಿದ ಪರಿಣಾಮ. ಮತ್ತು ಅದೇ
ಕ್ರಮವನ್ನು ಬಳಸಿ ತುಳುನಾಡಿನ ಸಿರಿ ಪಾಡ್ದನಗಳನ್ನು ಸಂಗ್ರಹಿಸಿದ ಕ್ರಮವನ್ನು ಅದರ ಸುತ್ತಲಿನ ವಿಷಯವನ್ನು ಮನಮುಟ್ಟುವಂತೆ
ಅರ್ಥಮಾಡಿಸಿದ್ದರು.

ನಾನು ಎಂ ಎ ಸೇರಿಕೊಂಡ ವರುಷವೇ ಮೊದಲಬಾರಿ ವಿಶ್ವವಿದ್ಯಾಲಯ ಮುಕ್ತ ವಿಷಯೊಂದನ್ನು ಆಯ್ಕೆಮಾಡಿಕೊಳ್ಳುವ ಹೊಸ ವಿಧಾನವನ್ನು
ಪರಿಚಯಿಸಿತ್ತು. ಅದನ್ನು open elective subject ಎಂದು ಕರೆದಿದ್ದರು ನಾವು ಆಯ್ದುಕೊಂಡ ವಿಷಯದ ಜೊತೆಗೆ open elective ವಿಷಯದ
ತರಗತಿಯ ಹಾಜರಿ ಮತ್ತು ಅದರ ಅಂಕಗಳು ಮುಖ್ಯವಾಗಿದ್ದವು. ಆ ಹೊತ್ತಿನಲ್ಲಿ ನನ್ನ ಕರೆದು ಮೇಡಂ ಹೇಳಿದ್ದರು 'ಯಾವ ವಿಷಯ ತಗೋಬೇಕು ಅನ್ನುವುದರ ಬಗ್ಗೆ ನಿಮಗೆ ಪೂರ್ಣ ಸ್ವಾತಂತ್ರವಿದೆ ಆದರೆ ನಿಮಗೊಂದು ಸಲಹೆ ಕೊಡುತ್ತೇನೆ. ಯಾವುದಾದರು ವಿದೇಶಿ
ಭಾಷೆಯನ್ನು ಆಯ್ಕೆಮಾಡಿ. ಅದರಿಂದ ನಿಮ್ಮ ಕಲಿಕೆ ಇನ್ನು ಉತ್ತಮಗೊಳ್ಳುತ್ತದೆ, ಮತ್ತು ಜಾನಪದ ವಿಧ್ಯಾರ್ಥಿಗಳು ಆಂಗ್ಲ ಭಾಷೆ ಮತ್ತು ಇತರ
ಭಾಷೆಗಳನ್ನು ಕಲಿಯಬೇಕು ಅದರಿಂದ ಅಧ್ಯಯನದಲ್ಲಿ ಹೊಸತನ ಕಾಣ ಸಿಗುತ್ತದೆ ಎಂದರು. ಅವರ ಮಾತಿನ ಅರ್ಥ,ದೂರದರ್ಶಿತ್ವ ಆಗ ನನಗೆ ನಿಜಕ್ಕೂ ಅರ್ಥವಾಗಿರಲಿಲ್ಲ. ಆದರೆ ಅವರ ಮಾತನ್ನು ಮೀರದೆ ಅವರ ಸಲಹೆಯಂತೆ ನಾನು ಕ್ರಮವಾಗಿ ಜರ್ಮನ್ ಮತ್ತು ಫ್ರೆಂಚ್ ಭಾಷೆಗಳನ್ನು ಆಯ್ಕೆ ಮಾಡಿಕೊಂಡು ಆ ಭಾಷೆಗಳ ಪ್ರಾರಂಭಿಕ ಕಲಿಕೆ ಮಾಡಲು ಸಾಧ್ಯವಾಯಿತು ,

`The dream begins with a teacher who believes in you ,who tugs and pushes and leads you to the next plateau sometimes poking you with a sharp stick' ಅನ್ನುವ ಮಾತು ಅದೆಷ್ಟು ಸತ್ಯ ನನ್ನಲ್ಲಿ ಅವರು ಕನಸುಗಳನ್ನು ಬಿತ್ತುತ್ತಿದ್ದರು ಸ್ನಾತಕೋತ್ತರ ಜಾನಪದ ಪದವಿ ಪಡೆದವರಿಗೆ ಲೆಕ್ಚರರಿಕೆ ಒಂದೇ ಆಯ್ಕೆ ಅಲ್ಲ! ಅದಲ್ಲದೆ ಹಲವಾರು ಕ್ರಿಯಾಶೀಲ ಕ್ಷೇತ್ರಗಳು ಕಾಯುತ್ತಿವೆ. ಆದರೆ ನಾವು ಅದರ ಬಗ್ಗೆ ಧೇನಿಸುತ್ತಿರಬೇಕು. ಸದಾಕಾಲ ಒಂದು ಎಚ್ಚರಿಕೆ ನಮ್ಮಲ್ಲಿರಬೇಕು. ಆ ಕ್ಷೇತ್ರದಲ್ಲಿ ಏನು ನಡೆಯುತ್ತಿದೆ ? ಯಾಕೆ ಹೀಗಲ್ಲದಿದ್ದರೆ ಹೇಗೆ ಆಗಬಹುದಿತ್ತು? ಅನ್ನುವ ಪ್ರಶ್ನೆಗಳನ್ನು ಪ್ರತಿ ವಿಷಯಕ್ಕೂ ನಮ್ಮನ್ನು ನಾವು ಕೇಳಿಕೊಳ್ಳಬೇಕು ಅದು ನಮ್ಮ ಆಲೋಚನೆಯನ್ನು ಮೊನಚು ಮಾಡುತ್ತದೆ ಎಂಬುದು ವಿದ್ಯಾರ್ಥಿಗಳಿಗೆಲ್ಲರಿಗೂ ಅವರು ಹೇಳುತ್ತಿದ್ದ ಕಿವಿಮಾತು.

ವಿರಾಮವಿರದ ಅವರ ದಿನಚರಿಯಲ್ಲೂ ಕ್ಲಾಸ್ ಗೆ ಒಮ್ಮೆಲೇ ಬಂದು ಯಾವುದಾದರೂ ವಿಷಯಗಳನ್ನು ಕೊಟ್ಟು ಅದರ ಬಗ್ಗೆ ಬರೆದು ತರಲು
ಹೇಳುತ್ತಿದ್ದರು ಮತ್ತು ಪ್ರತಿ ಬರಹವನ್ನು ಕೂಲಂಕಷವಾಗಿ ಪರಿಶಿಲಿಸಿ ತಿದ್ದುಪಡಿ ಹೇಳುತಿದ್ದರು.
ಆ ನಿಟ್ಟಿನಲ್ಲಿ ನಾನು ಹಲವು ಚಿಕ್ಕಪುಟ್ಟ ಲೇಖನ ಬರೆಯುತ್ತಿದ್ದೆ. ಅದರಲ್ಲಿ ಮುಖ್ಯವಾದದ್ದು ಚಿತ್ರರಂಗ ಮತ್ತು ಜಾನಪದ ಎಂಬ ವಿಷಯದ ಬಗ್ಗೆ
ವಿವರವಾಗಿ ಬರೆದ ನಿಬಂಧ. ಅದನ್ನು ನೆನೆಸಿಕೊಂಡರೆ ಈಗಲೂ ನನಗೆ ನಗು ಬರುತ್ತದೆ. ಸಾಕಷ್ಟು ವಿಷಯಗಳನ್ನು ಇಂಟರ್ನೆಟ್ ನಿಂದ
ಸಂಗ್ರಹಿಸಿದ್ದೆ. ಮೇಡಂ ಅವರಿಂದ ಸಾಕಷ್ಟು ಮೆಚ್ಚುಗೆಯನ್ನೂ ನಿರೀಕ್ಷಿಸಿದ್ದೆ. ಆದರೆ ಅವರು ಮಾತ್ರ 'ಸಂಗ್ರಹ ಚನ್ನಾಗಿದೆ ತುಂಬಾ ವಿಷಯ ಹುಡುಕಿದೀರಿ ಅನ್ನೋದನ್ನು ಬಿಟ್ಟು ಬೇರೇನೂ ಹೇಳಲೇ ಇಲ್ಲ. ನನಗೆ ನಿಜಕ್ಕೂ ಬೇಜಾರಾಗಿತ್ತು.
ಕೆಲವು ವಾರಗಳ ನಂತರ ನನ್ನ ಕರೆದು ಹೇಳಿದರು ‘ನೀವು ತುಂಬಾ ಶ್ರಮ ಪಡ್ತೀರಿ,ವಿಷಯ ಸಂಗ್ರಹಿಸ್ತೀರಿ ಬರೀತೀರಿ ಕೂಡ ಆದರೆ ಅದನ್ನು
ವ್ಯವಸ್ತಿತವಾಗಿ ಜೋಡಿಸುವುದರಲ್ಲಿ ಮುಗ್ಗರಿಸುತ್ತೀರಿ ಇದೊಂಥರ ಇಟ್ಟಿಗೆ ಸಿಮೆಂಟ್ ಕಲ್ಲು ಎಲ್ಲ ವನ್ನು ತಂದು ರಾಶಿ ಹಾಕಿ ಒಮ್ಮೆಲೇ ಮನೆ
ಕಟ್ಟುವ ಹುರುಪಿನಂತೆ. ಆದರೆ ಮನೆ ಕಟ್ಟಲು ಒಂದು ಕ್ರಮವಿದೆ ಅದನ್ನು ನೀವು ಕಲಿಬೇಕು ಅದಕ್ಕೆ ನೀವು ಬಹಳ ಓದಬೇಕು ಅಂದು ತಮ್ಮಲ್ಲಿದ್ದ
ಹಲವಾರು ಪುಸ್ತಕಗಳನ್ನು ನನಗೆ ಓದಲು ಕೊಟ್ಟಿದ್ದರು. ಬರವಣಿಗೆಯ ಮುನ್ನ ಸಂಗ್ರಹಿಸಿದ ವಿಷಯವನ್ನು ಹೇಗೆ ವಿಂಗಡಿಸುವುದು. ಕ್ರಮವಾಗಿ
ಜೋಡಿಸುವುದು ಮತ್ತು ನಿರೂಪಿಸುವುದು ಹೇಗೆ ಅನ್ನುವುದನ್ನು ಉದಾಹರಣೆಗಳ ಸಮೇತ ವಿವರಿಸಿದ್ದರು.

'A teacher is who gives you something to take home to Think about ,besides homework'
ಅವರು ಕಲಿಸುತ್ತಿದ್ದುದೆ ಹಾಗೆ, ಪಾಠಗಳು ನಿಮಿತ್ಯ ಮಾತ್ರ ಆದರೆ ನಿಜವಾದ ಪಾಠಶಾಲೆ ಸಮಾಜ, ಜನಪದವನ್ನು ನಾಲ್ಕು ಗೋಡೆಗಳ ಮಧ್ಯೆ
ಕುಳಿತು ಕಲಿಯಾಲಾಗದು, ನಿಮಗೆ ಅದರ ಗುಂಗು ಹಿಡಿಯಬೇಕು ಅನ್ನುತ್ತಿದ್ದರು ಮತ್ತು ಅದು ನನಗೆ ಹಿಡಿದೇ ಬಿಟ್ಟಿತು. ಕಾಲೇಜಿಗೆ ಹೋಗಲು
ನಾನು ದಿನ ಮುಂಡಗೊಡಿನಿಂದ ಧಾರವಾಡಕ್ಕೆ, ಮತ್ತೆ ವಾಪಸ್ ಮನೆಗೆ ಬರಲು ಬಸ್ನಲ್ಲಿ 150ಕಿಲೋಮೀಟರ್ ಪ್ರಯಾಣ ಮಾಡಬೇಕಿತ್ತು. ಆ
ಪಯಣದಲ್ಲಿ ದಿನದ ನಾಲ್ಕು ಘಂಟೆಗಳು ವ್ಯಯವಾಗುತಿದ್ದವು, ಅಷ್ಟು ಸಮಯ ನನ್ನ ಆಲೋಚನೆ ಓದು ಬರೀ ಜನಪದವೇ. ಕುರಿಮಂದೆಯ
ಹೆಣ್ಣುಮಗಳ ಕಿವಿಯಲ್ಲಿಯುವ ಬುಗುಡಿ ಯಿಂದ ಅದ್ಯಾರೊ ಹಿಡಿದು ಬಂದ ಕಸೂತಿ ಚೀಲದವರೆಗೆ. ಆಟೋ ರಿಕ್ಷಾ ಹಿಂಬದಿಯ ತಮಾಷೆ
ಬರಹಗಳಿಂದ ಹಿಡಿದು, ಜಗಳದಲ್ಲಿ ಬಳಸಲ್ಪಡುವ ಬೈಗುಳದಲ್ಲಿಯೂ, ಎಲ್ಲಿ ನೋಡಿದರಲ್ಲಿ ಜನಪದವೇ ಕಾಣುತಿತ್ತು.

ಮೇಡಂ ಅವರು ನನ್ನ ಮೇಲೆ ಅಷ್ಟು ಪರಿಣಾಮ ಬೀರಿದ್ದರು ಮಾತಿನಲ್ಲಿ, ಹಾಡಿನಲ್ಲಿ,ಕುಣಿತದಲ್ಲಿ ,ನಡೆಯಲ್ಲಿ ,ಹಿತ್ತಲ ಕಸದಲ್ಲೂ ಜನಪದೀಯ
ಅಂಶಗಳು ಕುಣಿದಾಡುತ್ತಿದ್ದವು. ಆಗ ನನ್ನ ಮನಸು ಬುದ್ದಿ ಅನುಭವಿಸಿದ ಆ ಖುಷಿ, ಆತ್ಮ ಸಂತೃಪ್ತಿಯನ್ನು ಬರಹದಲ್ಲಿ ಹಿಡಿದಿದಲಾಗದು. ಇಷ್ಟು
ವರ್ಷ ನಾನು ಹುಡುಕುತ್ತಿದ್ದುದು ಇದೆ ಏನೋ ಅನ್ನ್ನಿಸುವುದಕ್ಕೆ ಶುರುವಾಗಿದ್ದು ನನ್ನ ಎಲ್ಲ ಚಡಪಡಿಕೆಗಳಿಗೆ ಉತ್ತರ ಜಾನಪದ ಮಾತ್ರವೇ
ನೀಡಬಲ್ಲದು ಎಂಬ ಸತ್ಯ ಅರಿವಾಗಿತ್ತು.

ಇದೆ ಸಮಯದಲ್ಲಿ ಮೇಡಂ ಅವರ ಮತ್ತೊಂದು ಯೋಜನೆಯಿಂದ ನಾನು ಜಾನಪದದ ಮತ್ತೂಂದು ಮಗ್ಗಲು ನೋಡುವಂತಾಯಿತು. ಪ್ರವಾಸೋದ್ಯಮ ಮತ್ತು ಜಾನಪದ ಎಂಬ ವಿಷಯದ ಮೇಲೆ ಮೂರು ದಿನಗಳ ಕಾರ್ಯಾಗಾರ, ನನ್ನ ಸ್ನಾತಕೋತ್ತರ ಅಧ್ಯಯನದ ಇನ್ನೊಂದು ತಿರುವು ಅದು.
ಅಲ್ಲಿ ನಾ ತಿಳಿದ ,ನೋಡಿದ ,ಕಲಿತ ವಿಷಯ ಹಲವು ಅಲ್ಲಿಯ ತನಕ ಸಂಗೀತ ಮತ್ತು ಜಾನಪದವನ್ನು ಜೊತೆಮಾಡಿ ಅದನ್ನೇ ನನ್ನ ಮುಖ್ಯ
ಅಧ್ಯಯನದ ವಿಷಯವನ್ನಾಗಿ ಮಾಡಿಕೊಳ್ಳಬೇಕು, ಸಂಶೋಧನೆಗೆ ಅಣಿಯಾಗಬೇಕು ಅಂದುಕೊಂಡ ನನಗೆ ಜನಪದ ವೈದ್ಯದ ಮೇಲೆ ಪ್ರೀತಿ
ಹುಟ್ಟಿತು. ಅದಕ್ಕೆ ಕಾರಣವಾಗಿದ್ದು ಹೊನ್ನಾವರದ ಜನಪದ ತಜ್ಞೆ ಶ್ರೀಮತಿ ಶಾಂತಿ ನಾಯಕ್ .

ಸೆಮಿನಾರ್ ಮುಗಿಸಿ ಬಂದ ದಿನದಿಂದಲೇ ನಾನು ಮೇಡಂ ಅವರ ಬೆನ್ನು ಬಿದ್ದೆ. ಜನಪದ ವೈದ್ಯದ ಕುರಿತು ಅವರಲ್ಲಿದ್ದ ಅಪರೂಪದ ಪುಸ್ತಕಗಳು
,ಲೇಖನಗಳು, ಅವರಿಗೆ ತಿಳಿದಿದ್ದ ಹಲವಾರು ವಿಷಯಗಳನ್ನು ಸಮಯ ಸಿಕ್ಕಾಗಲೆಲ್ಲ ಚರ್ಚಿಸುತ್ತಿದ್ದರು.ಮತ್ತು ಜನಪದ ವೈದ್ಯದ ಕುರಿತು
ಸಂಶೋಧನೆ ಅಥವಾ ಅಧ್ಯಯನ ಮಾಡುವಾಗ ಎದುರಾಗುವ ಸಮಸ್ಯೆಗಳ ಬಗ್ಗೆ ಮೊದಲೇ ಅವರು ನನಗೆ ಎಚ್ಚರಿಸಲು ಮರೆಯಲಿಲ್ಲ.
ಅವರ ಕಾರಣದಿಂದಲೇ ನಾನು ಶಾಂತಿ ನಾಯಕ್ ,ಏನ್ ಆರ್ ನಾಯಕ್, ಅರವಿಂದ್ ನಾವಡ, ಅಂಬಳಿಕೆ ಹಿರಿಯಣ್ಣ ,ಮತ್ತು ಜಾನಪದ ಲೋಕದ ಹಲವು ದಿಗ್ಗಜರನ್ನು ಭೇಟಿ ಮಾಡಿದೆ.
ಸಮೂಹ ಸಂವಹನ ಮಾಧ್ಯಮಗಳು ಮತ್ತು ಜಾನಪದ ಎಂಬ ವಿಷಯದ ಬಗ್ಗೆ ವಿಚಾರ ಕಮ್ಮಟ ಏರ್ಪಡಿಸಿದಾಗ ಅಲ್ಲಿ ಚರ್ಚಿಸಬೇಕಾದ
ವಿಷಯಗಳನ್ನು ಮೇಡಂ ಅದೆಷ್ಟು ಚನ್ನಾಗಿ ಆಯ್ಕೆ ಮಾಡಿದ್ದಾರೆ ವಾಹ್ ಅನ್ನಿಸುತ್ತಿತ್ತು. ಪ್ರತಿಯೊಂದು ವಿಷಯವು ಅನನ್ಯ. ಟಿ ಎಸ ನಾಗಭರಣ
ಅವರನ್ನು ನೇರ ಸಂವಾದಕ್ಕೆ ಕರೆದು ಅದೆಷ್ಟು ಚಂದದ ಕಾರ್ಯಕ್ರಮವನ್ನು ವಿಧ್ಯಾರ್ಥಿಗಳ ಮುಂದೆ ಇಟ್ಟಿದ್ದರು ಮತ್ತು ಅದು ಅಷ್ಟೇ
ಉಪಯುಕ್ತವಾಗಿತ್ತು.
ಅಂಥದೇ ಇನ್ನೊಂದು ಅನನ್ಯ ಕಾರ್ಯಕ್ರಮ ಶಿರಸಿಯ ಅಜ್ಜಿಮನೆಯಲ್ಲಿ ನಡೆದ ಸ್ಥಳೀಯ ಪರಂಪರಾಗತ ಜ್ಞಾನ ಮತ್ತು ಆರೋಗ್ಯ. ಇಲ್ಲಿ
ಚರ್ಚಿತವಾದ ವಿಷಯಗಳೂ ಅಷ್ಟೇ ಈಗಲೂ ಹಸಿರು ಹಸಿರು ಕೆಲವೊಮ್ಮೆ ಶಿಬಿರದ ನಡುವೆ ಮೇಡಂ ನಮಗೆ ವಿಷಯ ಸಂಬಂಧಿ ಪ್ರಶ್ನೆ
ಕೇಳುತ್ತಿದ್ದರು, ಮತ್ತು ಸಂಪನ್ಮೂಲ ವ್ಯಕ್ತಿ ಮಾತನಾಡುತ್ತಿರುವ ವಿಷಯಕ್ಕೆ ನಾವು ಎಷ್ಟರ ಮಟ್ಟಿಗೆ ಕನೆಕ್ಟ್ ಆಗಿದ್ದೇವೆ ಎಂಬುದನ್ನು ಸೂಕ್ಷ್ಮವಾಗಿ
ಪರಿಶೀಲಿಸುತ್ತಿದ್ದರು , ಈ ದಿಸೆಯಲ್ಲಿ ನಾವು ಭೇಟಿಯಾದದ್ದು ಅಪರೂಪದ ವಿಜ್ಞಾನಿ ಪಲ್ಲತಡ್ಕ ಕೇಶವ ಭಟ್ಟ್ ಅವರನ್ನ , ಈ ರೀತಿಯ ಅನನ್ಯ
ವಿಚಾರ ಮತ್ತು ದೃಷ್ಟಿಕೋನ ಮತ್ತು ಸರಳತೆ ಮೇಡಂ ಅವರನ್ನು ಮತ್ತೂ ಹೆಚ್ಚು ಗೌರವಿಸುವಂತೆ ಮಾಡುತ್ತಿದ್ದವು ,

ಆ ವರೆಗೆ ಮೇಡಂ ಅಂದರೆ ನನಗೆ ನನ್ನ ದೊಡ್ಡಮ್ಮ ಚಿಕ್ಕಮ್ಮ ಸೋದರತ್ತೆ ರೂಪದಲ್ಲೇ ಕಂಡಿದ್ದರು. ಅವರು ಯಾವತ್ತು ಸಿಟ್ಟು ಮಾಡಿದ್ದು,
ಜೋರಾಗಿ ಮಾತಾಡಿದ್ದು,ತಾಳ್ಮೆ ಕಳೆದುಕೊಂಡಿದ್ದು ನಾನು ನೋಡೇ ಇಲ್ಲ. ಎಂಥ ಕಠಿಣ ಪರಿಸ್ಥಿತಿಯಲ್ಲೂ ಅವರೊಂದು ಹೊಸ ವಿಚಾರ ಹುಡುಕಿ
ಅದನ್ನು ಹಿಂಬಾಲಿಸಲು ಹೊರಡುತ್ತಿರುವಂತೆ ನನಗೆ ಭಾಸವಾಗುತಿತ್ತು.
ಅದು ನನ್ನ ಕೊನೆ ಸೆಮಿಸ್ಟರ್. ನಾವು ಕ್ಷೇತ್ರ ಕಾರ್ಯ ಮಾಡಿ ನಿಬಂಧವಿ ಬರೆದು ವಿಶ್ವವಿದ್ಯಾಲಯಕ್ಕೆ ಸಾದರಪಡಿಸಬೇಕಿತ್ತು. ನಾನು ಆಯ್ದು
ಕೊಂಡಿದ್ದು ಬಾಣಂತಿ, ನವಜಾತ ಶಿಶುವಿನ ಆರೈಕೆ ಮತ್ತು ಜನಪದ ವೈದ್ಯ ಪದ್ಧತಿ. ಆಗ ಮಾತ್ರ ಮೇಡಂ ಅವರ ಇನ್ನೊಂದು ರೂಪ ನೋಡಿದ್ದು.
ನಾನು ಅತಿ ಭಾವುಕಿ, ಸಿನಿಮ ಕಾದಂಬರಿ ಭಾವಗೀತೆ,ಗಝಲ್ ಹುಚ್ಚು ಇದ್ದಿದ್ದಕ್ಕೋ ಏನೋ ನನ್ನ ಬರವಣಿಗೆ ಒಂದು ವಿಚಿತ್ರ ಧಾಟಿಯಲ್ಲಿ
ಇರುತಿತ್ತು.

ರಜಾ ಅರ್ಜಿಯನ್ನೂ ಕವಿತೆಯಂತೆ ಬರೆಯುತ್ತಿದ್ದೆ. ನಿಬಂದ ಬರೆಯುವಾಗ ನನ್ನ ಅದೇ ಬರವಣಿಗೆ ಮುಂದುವರಿಯಿತು , ಮೇಡಂ ನಾಲ್ಕು ಬಾರಿ
ನನ್ನ ಕರಡು ಪ್ರತಿಯನ್ನು ಸರಿ ಇಲ್ಲ ಎಂದು ಮರಳಿಸಿ ಬಿಟ್ಟರು. ಅದು ಕೊನೆ ಹಂತ ನನ್ನಲ್ಲಿ ಸಾಕಷ್ಟು ಮಾಹಿತಿ ಇತ್ತು ಬರವಣಿಗೆ ಸಂಪೂರ್ಣ
ಗೊಂಡಿತ್ತು. ಯಾಕೆ ?ಏನು ತಪ್ಪು ಎಂಬುದು ಅರಿವಿಗೆ ಬರಲಿಲ್ಲ ,ಮತ್ತೆ ಕೊಟ್ಟೆ ಆಗ ಅಂದರು; ನಿಮ್ಮ ತಪ್ಪು ನಿಮಗೆ ಗೊತ್ತಾಗುತ್ತೆ ಅಂದುಕೊಂಡೆ.
ನೀವು ಅದನ್ನು ಗಮನಿಸಿಯೇ ಇಲ್ಲ ಆದಷ್ಟು ಸರಳ ವಾಕ್ಯಗಳನ್ನು ಬಳಸಿ. ನೇರ ವಿಷಯಗಳನ್ನು ಹೇಳುವಾಗ ಅಷ್ಟೇ ದೃಡವಾಗಿ ನೇರವಾಗಿ
ಹೇಳಬೇಕು ಮತ್ತು ಅದಕ್ಕೊಂದು ಚೌಕಟ್ಟಿರಬೇಕು ಎಲ್ಲೆಂದರಲ್ಲಿ ಹೇಗೆ ಬೇಕೋ ಹಾಗೆ ಬರೆಯೋದಲ್ಲ ಅಂದು ಮತ್ತೆ ವಾಪಸ್ ಮಾಡಿದ್ದರು.
ಬಸ್ಸಿನಲ್ಲಿ ಕುಳಿತು ಮತ್ತೆ ಹಾಳೆಗಳನ್ನು ತಿರುವಿದೆ ಪ್ರತಿ ಪುಟದಲ್ಲೂ ಅವರ ಅಕ್ಷರಗಳು. ಅಷ್ಟೂ ಪುಟಗಳನ್ನು ಓದಿ ಮಾರ್ಕ್ ಮಾಡಿ ಕೊಟ್ಟಿದ್ದರು.
ಅದನ್ನು ಹೇಗೆ ಬರೆಯಬಹುದು ಅನ್ನುವುದನ್ನು ಸೂಚ್ಯವಾಗಿ ಹೇಳಿದ್ದರು ಆಗಲೇ ಅನ್ನಿಸಿದ್ದು, ಕಾವ್ಯಾತ್ಮಕ ಬರವಣಿಗೆ ಮತ್ತು ನೇರ ಬರವಣಿಗೆ
ಅದೆಷ್ಟು ದೂರ ದೂರ. ಸ್ವಲ್ಪ ಆಯ ತಪ್ಪಿದರು ಅರ್ಥ ಅಪಾರ್ಥ ಆಗುವ ಸಂಭವ ಇರುತ್ತದೆ ಅಧ್ಯಯನ ಪ್ರಬಂಧ ಲಲಿತ ಪ್ರಬಂಧವಾಗುವ
ಸಾಧ್ಯತೆ ಇರುತ್ತದೆ. ಅದನ್ನು ಮೇಡಂ ನನಗೆ ಅದೆಷ್ಟು ಚನ್ನಾಗಿ ಅರ್ಥ ಮಾಡಿಸಿದ್ದರು.

ಜಾನಪದ ದ ಬಗ್ಗೆ ಮಾತಾಡುವ ಹಲವರು ಜನಪದ ಕಲಾವಿದರನ್ನು ನಡೆಸಿಕೊಳ್ಳುವ ರೀತಿಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಜನಪದ
ಉಳಿಸಿ ಬೆಳೆಸಿ ಅನ್ನುತ್ತಾ ಭಾಷಣ ಮಾಡಿ ಹಾರ ತುರಾಯಿ ಹಾಕಿಸಿಕೊಂಡು, ಕಾರಿಡಾರಿನಲ್ಲಿ ನಡೆಯುವಾಗ ಅದೇ ಮಗ್ಗುಲಲ್ಲಿ ಕುಳಿತ ಜನಪದ
ಕಲಾವಿದರಿಗೆ ನಕ್ಕು ನಮಸ್ಕರಿಸಿದ ದೊಡ್ಡ ವಿದ್ವಾಂಸರೂ ಈ ಕ್ಷೇತ್ರದಲ್ಲಿ ಇದ್ದಾರೆ.
ಅಂಥಹ ಸಂದರ್ಭದಲ್ಲಿ ನಮ್ಮ ವಿಶ್ವವಿದ್ಯಾಲಯಕ್ಕೆ ಜನಪದ ಕಲೆಗಳು ಪ್ರಾಯೋಗಿಕ ಪರೀಕ್ಷೆಗಳಿಗೆಂದು ಹಾಲಕ್ಕಿ ಸುಗ್ಗಿ, ಕೋಲಾಟ ಕಲಿಸಲು ಬಂದ ಕಲಾವಿದರನ್ನು ಅದೆಷ್ಟು ಆತ್ಮೀಯವಾಗಿ ಮಾತನಾಡಿಸಿ, ಅವರ ಯೋಗಕ್ಷೇಮ ವಿಚಾರಿಸಿ ,ಅವರೊಂದಿಗೆ ಅದೆಷ್ಟು ಸರಳತೆಯಿಂದ
ಸಜ್ಜನಿಕೆಯಿಂದ ವರ್ತಿಸುವ ಮೇಡಂ.ಅವರ ಊಟ ತಿಂಡಿ ವಸತಿ ಬಗೆಗೆ ಮನೆ ಮಂದಿಯ ಬಗ್ಗೆ ವಹಿಸುವ ಕಾಳಜಿಯನ್ನೇ ತೋರಿಸುವುದು
ನೋಡಿದಾಗ ಅವರು ತುಂಬಿದ ಕೊಡ ಅನಿಸಿದ್ದು ಅದೆಷ್ಟು ಸಲವೂ.

ಹಾಗೆ ಒಂದು ದಿನ ಅವರ ಆಫೀಸ್ ನಲ್ಲಿ ನಾನು ಯಾವುದೊ ವಿಷಯ ಅವರೊಂದಿಗೆ ಚರ್ಚಿಸುತ್ತಿದ್ದಾಗ ,ಆಗಷ್ಟೇ ಪಿ ಹೆಚ್ ಡಿ ಸೇರಿಕೊಂಡ ನನ್ನ
ಸಿನಿಯರ್ ಒಬ್ಬರಿಗೆ ಲಕೊಟೆ ಒಂದನ್ನು ಕೊಟ್ಟರು. ನಿಮ್ಮ ಸ್ಕಾಲರ್ಷಿಪ್ ಬರೋತನಕ ಸುಮಾರು ಕೆಲಸ ಮಾಡಲಿಕ್ಕೆ ಇರುತ್ತದೆ, ಮತ್ತು ಖರ್ಚು
ಆಗುತ್ತೆ ಇದು ನನ್ನ ಪುಟ್ಟ ಸಹಾಯ ನಿಮಗೆ.ಅಧ್ಯಯನ ಚೆನ್ನಾಗಿ ನಡೀಲಿ ಎಂದು ಆಶೀರ್ವದಿಸಿದರು. ಆ ವಿದ್ಯಾರ್ಥಿ ಹೊರಗೆ ಹೋದ ನಂತರ
ಪ್ರತಿ ವರ್ಷ ಯೋಗ್ಯ ಅನಿಸಿದ ಒಬ್ಬ ವಿದ್ಯಾರ್ಥಿಗೆ ನನ್ನ ಪತಿಯ ಸ್ಮರಣಾರ್ಥ ಒಂದಷ್ಟು ಸಹಾಯ ಮಾಡ್ತೇನೆ ನನ್ನ ಮನಸಿನ ನೆಮ್ಮದಿಗೆ ಅಂದರು ಆ ದಿನ ಅವರ ಮತ್ತೊಂದು ಅನನ್ಯತೆ ನನಗೆ ಕಾಣಿಸಿತ್ತು.

ನನಗನಿಸಿದ ಪ್ರಕಾರ ಅವರ ಸೃಜನ ಶೀಲತೆ ,ಮತ್ತು ನವೀನ ಆಲೋಚನೆಗಳು ಅವುಗಳನ್ನು ಕಾರ್ಯಗತ ಮಾಡುವಲ್ಲಿ ಹಲವಾರು ಬಾರಿ
ಪೂರಕ ವಾತಾವರಣ ಇರುತ್ತಿರಲಿಲ್ಲ ಸಿಬ್ಬಂದಿ ಸಹಕಾರ ,ಕೆಲವೊಮ್ಮೆ ವಿದ್ಯಾರ್ಥಿಗಳ ನಿರಾಸಕ್ತಿ ಅವರಿಗೆ ಬೇಸರ ತರುತ್ತಿತ್ತು, ಆದರೆ ಎಂದು ಆ
ಕಾರಣ ಕೊಟ್ಟು ಯಾವುದೇ ಯೋಜನೆಯನ್ನು ಅವರು ಕೈಬಿಟ್ಟಿಲ್ಲ. ಜನಪದ ಸಂಗ್ರಹಾಲಯ ಮತ್ತು ಅದಕ್ಕೆ ವಸ್ತುಗಳನ್ನು ಪೇರಿಸುವ ಕೆಲಸದಲ್ಲಿ
ಅವರು ತೋರಿಸುತ್ತಿದ್ದ ಆಸಕ್ತಿ ಪುಟ್ಟ ಮಗು ಹೊಸ ವಿಷಯಕ್ಕೆ ತೋರುವ ಉತ್ಸಾಹದಂಥದ್ದು.

ಒಮ್ಮೆ ನನಗೆ ರಂಗಗೀತೆ ಗಳ ಬಗ್ಗೆ ಸ್ವಲ್ಪ ವಿವರಣೆಗಳು ಬೇಕಿದ್ದವು. ನಾನು ಅವರನ್ನು ಆ ಬಗ್ಗೆ ಕೇಳಿದ್ದೆ ಮತ್ತು ಅದನ್ನು ಮರೆತು ಬಿಟ್ಟಿದ್ದೆ. ಆದರೆ
ಅವರು ತಮ್ಮ ಸಂಗ್ರಹದಲ್ಲಿನ ಪುಸ್ತಕ ಹುಡುಕಿ ಮತ್ತೆ ಸಂಜೆ ನನಗೆ ಫೋನ್ ಮಾಡಿದ್ದರು ನಾಳೆ ಪುಸ್ತಕ ತಗೊಂಡ್ ಹೋಗು ಅದು ಸಿಕ್ಕಿದೆ ಎಂದಾಗ ಅವರು ಆಸಕ್ತ ವಿದ್ಯಾರ್ಥಿಗಳಿಗಾಗಿ ಕೊಡುತ್ತಿದ್ದ ಸಮಯ ಮತ್ತು ಪ್ರಾಮುಖ್ಯತೆ ಅರಿವಿಗೆ ಬಂದಿತ್ತು.
ಕಲಿಯುವ ಮನಸ್ಸಿರುವ ವಿದ್ಯಾರ್ಥಿಗೆ ಇಂಥ ಒಬ್ಬ ಗುರು ದಕ್ಕಿದರೆ ಆ ವಿದ್ಯಾರ್ಥಿಯ ಭವಿಷ್ಯ ಉಜ್ವಲ ವಾದಂತೆಯೇ. ಕಲಿಯುವ ಪಾಠ
ಪಾಠವಾಗಿರದೆ ಅದು ಬದುಕಿಗೆ ಇಂಬುಕೊಡುವ ವಿದ್ಯೆಯಾಗಿತ್ತದೆ.

ನನ್ನ ನೆರವೇರದ ಆಸೆ ಎಂದರೆ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಮಾಡಬೇಕು ಎಂಬುದು. ಸ್ನಾತಕೋತ್ತರ ಅಧ್ಯಯನ ಮುಗಿದ ನಂತರ ನಾನು ಬೆಲ್ಫಾಸ್ಟ್ ಬಂದು ಸೇರಿದೆ. ವಿಶ್ವವಿದ್ಯಾಲಯದ ಕೆಲವು ನಿಯಮಗಳು ಕಲಿಯುವ ತುಡಿತವಿರುವ ವಿದ್ಯಾರ್ಥಿಗಳಿಗೆ ಬೇಲಿ ಹಾಕಿಬಿಡುತ್ತವೆ.
ಆದರೂ ಇಂದಿಗೂ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವೆ. ನಾನು ಇಷ್ಟ ಪಟ್ಟು ಆಯ್ಕೆ ಮಾಡಿಕೊಂಡ ಜನಪದ ನನ್ನ ಕೈಹಿಡಿದು
ಮುನ್ನಡೆಸಿದೆ ಈಗಲೂ ನಾ ಅವರಿಗೆ ಫೋನ್ ಮೂಲಕ ಸಂಪರ್ಕಿಸಿದರೆ ಅದೇ ಆತ್ಮೀಯತೆ ಅಷ್ಟೇ ಆಪ್ಯಾಯತೆ ಅಕ್ಕರೆ. “ಶಾನಭಾಗ್ ಊರಿಗೆ
ಬಂದೀರ?” ಎನ್ನುತ್ತಲೇ ಮಾತು ಶುರುಮಾಡಿ ಅದೆಷ್ಟು ವಿಷಯ, ಉಲ್ಲೇಖ, ನೆನಪು ಹಂಚಿಕೊಳ್ತಾರೆ. ನನ್ನ ಬಾಲಿಶ ಪ್ರಶ್ನೆಗಳಿಗೆ ತಾಳ್ಮೆಯಿಂದ
ಉತ್ತರಿಸುತ್ತಾರೆ , ಅವರ ಶಿಷ್ಯೆ ಅವರ ವಿದ್ಯಾರ್ಥಿನಿ ಅನ್ನಲು ನನಗೆ ಯಾವತ್ತಿಗೂ ಹೆಮ್ಮೆ.

ಸಂಧ್ಯಾದೀಪಗಳ ದಾರಿಯಲ್ಲಿ

ಈ ವಾರದ ಸಂಚಿಕೆಯಲ್ಲಿ ಬೆಂಗಳೂರಿನ ನಿವೃತ್ತಿ-ನಂತರದ ಹಿರಿಯರ ಮನೆಯನ್ನು ಕುರಿತಾದ ನನ್ನ ಲೇಖನವನ್ನು ನಿಮ್ಮ ಮುಂದಿಡುತ್ತಿದ್ದೇನೆ. ಇಲ್ಲಿ ಕೆಲವು ಹಿರಿಯ ನಾಗರೀಕರು  ಬದುಕಿನ ಸಂಧ್ಯಾ ಕಾಲದಲ್ಲಿ ಸವಾಲುಗಳನ್ನು ಎದುರಿಸಿ ಹೇಗೆ ಪರಿಹಾರ ಕಂಡುಕೊಂಡಿದ್ದಾರೆ,  ಅವರು ಹೇಗೆ ಹೊಂದಾಣಿಕೆ ಮಾಡಿಕೊಂಡು ಬದುಕುತ್ತಿದ್ದಾರೆ 
ಮತ್ತು ಅವರ ಮುಂದಿರುವ ಆಯ್ಕೆಗಳೇನು? ಎಂಬುದನ್ನು ವಿಶ್ಲೇಷಿಸಿದ್ದೇನೆ. ಇಲ್ಲಿ ಭಾರತ ಮತ್ತು ಬ್ರಿಟನ್ನಿನ್ನ ಹಿರಿಯರ ಬದುಕನ್ನು ಒಂದಕ್ಕೊಂದು ಪರ್ಯಾಯವಾಗಿ ಇಟ್ಟು ನೋಡುವ ಪ್ರಯತ್ನ ನನ್ನದಾಗಿದೆ. ಹಿಂದೆ ನಾನು ಬರೆದ "ಬದಲಾಗುತ್ತಿರುವ ಸಮಾಜದಲ್ಲಿ ವೃದ್ಧರು' ಎಂಬ ಲೇಖನದ ಇನ್ನೊಂದು ಅಧ್ಯಾಯವೇ ಈ ಬರಹ ಎನ್ನಬಹುದು. ಬೆಂಗಳೂರಿನಲ್ಲಿ ನಾನು ಭೇಟಿನೀಡಿದ ‘ಪ್ರೈಮಸ್ ರಿಫ್ಲೆಕ್ಷನ್ಸ್’ ಎಂಬ ಹಿರಿಯರ ಮನೆಯ ಬಗ್ಗೆ ನನ್ನ ಕೆಲವು ಅನಿಸಿಕೆಗಳನ್ನು ಇಲ್ಲಿ ದಾಖಲಿಸಿದ್ದೇನೆ. ಬೆಂಗಳೂರಿನ ಇನ್ನೊಂದು ಹಿರಿಯರ ಮನೆ ‘ಸಂಧ್ಯಾದೀಪ’ ಕುರಿತಾದ ನನ್ನ ಕವನವನ್ನು ಇಲ್ಲಿ ಪ್ರಕಟಿಸಲಾಗಿದೆ. ಯೌವನ ಮತ್ತು ವೃದ್ಧಾಪ್ಯ ಇವೆರಡರ ಕೆಲವು ಅಭಿಮುಖಗಳನ್ನು ಚಿತ್ರಿಸುವ "ಅಂದು-ಇಂದು" ಎಂಬ ಡಾ. ರಘುನಾಥರ ಕವನ ಇಲ್ಲಿದೆ. ಕೊನೆಯದಾಗಿ ಪ್ರೈಮಸ್ ಹಿರಿಯರ ಮನೆಯ ಸಾಹಿತ್ಯಾಸಕ್ತ ನಿವಾಸಿಯಾದ ಪುಷ್ಪ ಅವರು ಕನ್ನಡ ರಾಜ್ಯೋತ್ಸವ ಮತ್ತು ಕರ್ನಾಟಕ ಏಕೀಕರಣದ ಹಿನ್ನೆಲೆಯನ್ನು ಕುರಿತು ಬರೆದ ಲೇಖನ ಇಲ್ಲಿದೆ. ಕನ್ನಡ ರಾಜ್ಯೋತ್ಸವವಾಗಿ ಕೆಲವು ದಿನಗಳಾಗಿವೆ, ನಾವೆಲ್ಲಾ ಇನ್ನು ಅದರ ನೆನಪಿನ ಪರವಶತೆಯಲ್ಲಿರುವಾಗ ಈ ಬರಹ ಸಮಯೋಚಿತವಾಗಿದೆ ಎಂದು ಭಾವಿಸಿ ಪ್ರಕಟಿಸಲಾಗಿದೆ.


-ಸಂ
ಫೋಟೋ ಕೃಪೆ ಗೂಗಲ್
ಸಂಧ್ಯಾ ದೀಪಗಳ ದಾರಿಯಲ್ಲಿ

ಡಾ. ಜಿ. ಎಸ್. ಶಿವಪ್ರಸಾದ್

ಪಾಶ್ಚಿಮಾತ್ಯ ದೇಶಗಳಲ್ಲಿ ನರ್ಸಿಂಗಹೋಮ್ ಎಂದರೆ ಅನಾರೋಗ್ಯದಿಂದಾಗಿ ತಮ್ಮ ಸ್ವಾವಲಂಬನೆಯನ್ನು ಕಳೆದುಕೊಂಡು ಇತರರನ್ನು ಅವಲಂಬಿಸಿ ಬದುಕುತ್ತಿರುವ ಹಿರಿಯರ ಮನೆ ಎನ್ನ ಬಹುದು. ಇದು ಖಾಸಗಿ ಅಥವಾ ಸರ್ಕಾರ ನಡೆಸುತ್ತಿರುವ ಸಂಸ್ಥೆಯಾಗಿರುತ್ತದೆ. ತಕ್ಕ ಮಟ್ಟಿಗೆ ಗಟ್ಟುಮುಟ್ಟಾಗಿರುವ ಹಿರಿಯರು ದಂಪತಿಗಳಾಗಿ ಅಥವಾ ಒಬ್ಬಂಟಿಗರಾಗಿ ತಮ್ಮ ತಮ್ಮ ಮನೆಗಳಲ್ಲಿ ವಾಸಮಾಡುವುದು ಸಾಮಾನ್ಯ. ಇನ್ನು ಕೆಲವು ಹಣವಂತರು ತಮ್ಮ ದೊಡ್ಡ ಮನೆಗಳನ್ನು ಮಾರಿಕೊಂಡು ಆಕರ್ಷಕವಾಗಿರುವ, ಸೆಕ್ಯೂರಿಟಿ ಒದಗಿಸುವ, ಹೊಟೇಲಿನಂತೆ ಹಲವಾರು ಸೌಲಭ್ಯಗಳು ಇರುವ ಬಹು ಅಂತಸ್ತಿನ ರಿಟೈರ್ಮೆಂಟ್ ಹೋಮ್ ಗಳಲ್ಲಿ ವಾಸಮಾಡುತ್ತಾರೆ.

ಭಾರತದಲ್ಲಿ ಕಳೆದ ದಶಕಗಳ ಹಿಂದೆ ಜಾಯಿಂಟ್ ಫ್ಯಾಮಲಿ ವ್ಯವಸ್ಥೆ ಇದ್ದು, ಮಕ್ಕಳು, ಮೊಮ್ಮಕಳು ಹಿರಿಯರನ್ನು ಆತ್ಮೀಯವಾಗಿ ಪ್ರೀತಿ ಗೌರವಗಳಿಂದ ನೋಡಿಕೊಳ್ಳುತ್ತಿದ್ದರು. ಅದು ಸಮಾಜದ ನಿರೀಕ್ಷೆಯಾಗಿತ್ತು, ವ್ಯವಸ್ಥೆಯ ಅಂಗವಾಗಿತ್ತು. ಹಿರಿಯರು ತಾವು ಹಿಂದೆ ಕಟ್ಟಿಸಿದ ಮನೆಗೆ ಭಾವನಾತ್ಮಕ ಕಾರಣಗಳಿಂದ ಜೋತು ಬಿದ್ದು ಸಾಯುವತನಕ ಕಷ್ಟವೋ ಸುಖವೋ ಮಕ್ಕಳ ಜೊತೆಗೇ ಬದುಕುತ್ತಿದ್ದರು. ಹೆತ್ತವರು ಆಳಿದ ಮೇಲೆ ಆ ಮನೆ, ಅಸ್ತಿ ಮಕ್ಕಳಿಗೆ ಮೊಮ್ಮಕ್ಕಳಿಗೆ ಹೋಗುತ್ತಿತ್ತು. ವಿವಾಹ ವಿಚ್ಛೇದನವನ್ನು ಸಮಾಜ ಒಪ್ಪುತ್ತಿರಲಿಲ್ಲ. ಹೀಗಾಗಿ ಹಿಂದಿನ ಕಾಲದಲ್ಲಿ ಸಂಸಾರಗಳು ಅವಿಭಾಜ್ಯ ಕುಟುಂಬಗಳಾಗಿ ಜೀವನ ನಡೆಸುತ್ತಿದ್ದವು. ಆ ತಲೆಮಾರಿಗೆ ವೃದ್ಧಾಶ್ರಮದ ಅಗತ್ಯವಿರಲಿಲ್ಲ. ಈಗಲೂ ಕೆಲವು ಸಂಸಾರಗಳು ಜಾಯಿಂಟ್ ಫ್ಯಾಮಿಲಿ ವ್ಯವಸ್ಥೆಯಲ್ಲಿ ಬದುಕುತ್ತಿವೆ. ಆದರೆ ಇಂದಿನ ಕೌಟುಂಬಿಕ ವ್ಯವಸ್ಥೆಯಲ್ಲಿ, ಬದಲಾಗುತ್ತಿರುವ ಭಾರತದಲ್ಲಿ, ಕಿರಿಯ ದಂಪತಿಗಳು ತಮ್ಮ ವೃತ್ತಿಯ ಒತ್ತಡದಿಂದಾಗಿ ಅಥವಾ ವಿದೇಶದಲ್ಲಿ ಇರಬೇಕಾದ ಪರಿಸ್ಥಿತಿಯಿಂದಾಗಿ ತಮ್ಮ ಹಿರಿಯ ತಂದೆ ತಾಯಿಯನ್ನು ನೋಡಿಕೊಳ್ಳಲು ಸಾಧ್ಯವಾಗದೇ ಇರುವ ಸನ್ನಿವೇಶಗಳಲ್ಲಿ ವೃದ್ಧಾಶ್ರಮಗಳು ಅನಿವಾರ್ಯವಾಗಿವೆ.

ಇನ್ನು ವಿದೇಶದಲ್ಲಿ ನೆಲೆಸಿರುವ ಭಾರತೀಯರು, ಕನ್ನಡಿಗರು ತಾವು ತಮ್ಮ ಸಂಧ್ಯಾ ಕಾಲದಲ್ಲಿ ಎಲ್ಲಿ ನೆಲೆಸುವುದು ಎಂಬ ದ್ವಂದದಲ್ಲಿ ಬದುಕುತ್ತಿದ್ದಾರೆ. ನಿವೃತ್ತಿ ಪಡೆದ ನಂತರ ಈ ವಿದೇಶದಲ್ಲಿ ಬದುಕುವ ಆಸಕ್ತಿ ಕೆಲವರಲ್ಲಿ ಕಡಿಮೆಯಾಗಿ ತಾಯ್ನಾಡಿನ ತುಡಿತ ಹೆಚ್ಚಾಗುವುದು ಸಹಜ. ಭಾಷೆ ಮತ್ತು ಸಾಂಸ್ಕೃತಿಕ ಪ್ರಜ್ಞೆ ಜಾಗೃತವಾಗಿರುವವರಿಗೆ ಇದು ಹೆಚ್ಚಿನ ಸಮಸ್ಯೆಯಾಗಬಹುದು. ಇಂಗ್ಲಿಷ್ ಸಂಸ್ಕೃತಿಯನ್ನು ಸಂಪೂರ್ಣವಾಗಿ ಅಪ್ಪಿಕೊಂಡು ಬದುಕುತ್ತಿರುವವರಿಗೆ ಮತ್ತು ಬಲವಾದ ಸಾಂಸಾರಿಕ ನೆಂಟುಗಳು ಭಾರತಕ್ಕಿಂತ ವಿದೇಶದಲ್ಲೇ ಹೆಚ್ಚಾಗಿರುವವರಿಗೆ ಭಾರತಕ್ಕೆ ಮರಳುವ ಹಂಬಲ ಕಡಿಮೆ ಎನ್ನಬಹುದು. ಈ ವಿಚಾರ ನಮ್ಮ ಮೊದಲನೇ ಪೀಳಿಗೆಯವರಿಗಷ್ಟೇ ಪ್ರಸ್ತುತ ಸಮಸ್ಯೆ.

ಭಾರತಕ್ಕೆ ಮರಳಿ ಬರುಲು ಇಚ್ಛಿಸುವ ಅನಿವಾಸಿಗಳು, ನಿವೃತ್ತಿಯಲ್ಲಿ ಸ್ವಲ್ಪ ಹಣ ಉಳಿಸಿಕೊಂಡವರು ಇಲ್ಲಿಯ ಚಳಿಗೆ ಬೇಸತ್ತು, ಇಳಿ ವಯಸ್ಸಿನಲ್ಲಿ ಭಾರತಕ್ಕೆ ಬಂದು ನೆಲಸ ಬಾರದೇಕೆ ಎಂದು ಆಲೋಚಿಸುತ್ತಿದ್ದಾರೆ. ಇನ್ನು ಇತ್ತೀಚಿಗೆ ನಿವೃತ್ತಿ ಪಡೆದು ಒಳ್ಳೆ ಆರೋಗ್ಯವನ್ನು ಕಾಪಾಡಿಕೊಂಡಿರುವವರು ಚಳಿಗಾಲದಲ್ಲಿ ಬ್ರಿಟನ್ನಿನ ಚಳಿಯನ್ನು ತಪ್ಪಿಸಿಕೊಂಡು ೪-೬ ತಿಂಗಳವರೆಗೆ ಭಾರತದಲ್ಲಿ ವಾಸಮಾಡುವ ಸಾಧ್ಯತೆಯನ್ನು ಕಂಡುಕೊಂಡಿದ್ದಾರೆ. ಅಲ್ಲೊಂದು ಫ್ಲ್ಯಾಟ್ ತೆಗೆದುಕೊಂಡು ಅಲ್ಲೂ-ಇಲ್ಲೂ ವಾಸವಾಗಿರುತ್ತಾ ‘ಬೆಸ್ಟ್ ಆಫ್ ಬೋತ್ ವರ್ಲ್ಡ್ಸ್’ ಎನ್ನುವ ಖುಷಿಯಲ್ಲಿ ವಾಸ ಮಾಡುತ್ತಿದ್ದಾರೆ. ಈ ಒಂದು ವ್ಯವಸ್ಥೆ ಎಲ್ಲಿಯವರಗೆ ಎಂಬ ಪ್ರಶ್ನೆ ಮೂಡುತ್ತದೆ. ನನ್ನ ಅಂದಾಜಿನಲ್ಲಿ, ಎಲ್ಲಿಯವರೆಗೆ ಸಾಧ್ಯವೋ ಅಲ್ಲಿಯವರೆಗೆ ಎನ್ನ ಬಹುದು. ಬ್ರಿಟನ್ನಿನಿಂದ ಭಾರತಕ್ಕೆ ಹಿಂದೆ ಮುಂದೆ ಪ್ರಯಾಣಿಸುವುದು ಚಿಕ್ಕ ವಯಸ್ಸಿನಲ್ಲಿ ಸರಾಗವಾದರೂ ಒಂದು ವಯಸ್ಸಾದ ಮೇಲೆ ಕಠಿಣವಾಗಬಹುದು. ಆರೋಗ್ಯ ಕೈಕೊಡಬಹುದು, ವಿಮಾನ ದರಗಳು ವರ್ಷ ವರ್ಷ ಹೆಚ್ಚಾಗುತ್ತಿದ್ದು ಒಂದು ಹಂತದಲ್ಲಿ ದುಬಾರಿ ಎನಿಸ ಬಹುದು. ಮುಂಬರುವ ಯಾವುದೋ ಒಂದು ಹಂತದಲ್ಲಿ ಈ ಹಿರಿಯರು ಎರಡು ಕಡೆ ವಾಸ ಮಾಡುವುದನ್ನು ಬಿಟ್ಟು ಒಂದೆಡೆ ನೆಲೆಸುವ ನಿರ್ಧಾರವನ್ನು ಕೈಗೊಳ್ಳಬೇಕಾಗುತ್ತದೆ.

ಹದಗೆಡುತ್ತಿರುವ ಅನಾರೋಗ್ಯದಿಂದ ತಮ್ಮ ದಿನ ನಿತ್ಯ ಬದುಕಿಗೆ ಇನ್ನೊಬ್ಬರನ್ನು ಅವಲಂಬಿಸಬೇಕಾದ ಸನ್ನಿವೇಶದಲ್ಲಿ, ಬ್ರಿಟನ್ನಿನಲ್ಲಿ ಸಾಕಷ್ಟು ಹಣ ತೆರಬೇಕಾಗುತ್ತದೆ. ನರ್ಸಿಂಗ್ ಹೋಂ ಸೇರಲು ತಮ್ಮ ತಮ್ಮ ಮನೆಗಳನ್ನು ಅಡವಿಡಬೇಕಾದ ಅನಿವಾರ್ಯವನ್ನು ಕಂಡಿದ್ದೇವೆ, ಕೇಳಿದ್ದೇವೆ. ಈ ನರ್ಸಿಂಗ್ ಹೋಮ್ ಅಥವಾ ರೆಸಿಡೆನ್ಶಿಯಲ್ ಹೋಂ ಗಳಲ್ಲಿ ಬ್ರಿಟಿಷ್ ಆಹಾರವನ್ನು ಸೇವಿಸುತ್ತಾ, ಗೊತ್ತು ಪರಿಚಯವಿಲ್ಲದ ಬೇರೊಂದು ಸಂಸ್ಕೃತಿಯ ಜನರೊಂದಿಗೆ ಬೆರೆಯುತ್ತಾ ಕೊನೆ ಘಳಿಗೆಯನ್ನು ಕಳೆಯುವುದು ಹೇಗೆ? ಎಂಬ ಚಿಂತೆ ಮೂಡುವುದು ಸಹಜವೇ. ತಮ್ಮ ತಮ್ಮ ಮನೆಗಳಲ್ಲೇ ಸಹಾಯಕ ಸಿಬಂದ್ಧಿಗಳನ್ನು ಇಟ್ಟುಕೊಂಡು ಬದುಕುವುದಕ್ಕೆ ಬಹಳ ಹಣ ಬೇಕು. ಈ ಹಿನ್ನೆಲೆಯಲ್ಲಿ ಇದರ ಅರ್ಧ ದುಡ್ಡಿಗೆ ಭಾರತದಲ್ಲಿ ಯಾವುದಾದರೂ ವೃದ್ಧಾಶ್ರಮದಲ್ಲಿ ಅಥವಾ ಫ್ಲ್ಯಾಟಿನಲ್ಲಿ ಸಹಾಯಕ ಸಿಬಂದ್ಧಿಯನ್ನು ಗೊತ್ತುಮಾಡಿಕೊಂಡು ಬದುಕಬಹುದು ಎಂಬ ಒಂದು ಆಯ್ಕೆ ನಮ್ಮ ಕಲ್ಪನೆಗೆ ಒದಗಿ ಬರುತ್ತಿದೆ. ಇದು ಸಾಧ್ಯ ಎಂದು ಕೆಲವು ಹಿರಿಯರು ತಮ್ಮ ಅನುಭವದಿಂದ ತಿಳಿಸಿದ್ದಾರೆ.

ಇದೇ ಒಂದು ಸನ್ನಿವೇಶದಲ್ಲಿ ಸಿಲುಕಿದ್ದ ನಮ್ಮ ಕನ್ನಡ ಬಳಗದ ಹಿರಿಯ ಸದಸ್ಯರು ಮತ್ತು ದಂಪತಿಗಳಾದ ಡಾ.ಅಪ್ಪಾಜಿ ಗೌಡ ಮತ್ತು ಡಾ.ಭಾನುಮತಿ ಅವರು ಬೆಂಗಳೂರಿಗೆ ತೆರಳಿ ಅಲ್ಲಿ ಉತ್ತಮ ಗುಣಮಟ್ಟದ ಸೌಲಭ್ಯ ಇರುವ ಪ್ರೈ ಮುಸ್ ರಿಫ್ಲೆಕ್ಷನ್ಸ್ ಎಂಬ ಹಿರಿಯರ ಮನೆ ಅಥವಾ ಆಶ್ರಯ ಸಂಕೀರ್ಣ ( Residential complex) ಎನ್ನಬಹುದಾದ ಸಂಸ್ಥೆಯಲ್ಲಿ ವಾಸವಾಗಿದ್ದರು. ಡಾ ಅಪ್ಪಾಜಿ ಅವರ ಅನಾರೋಗ್ಯ ಉಲ್ಪಣಗೊಂಡಾಗ ತಕ್ಕ ಮಟ್ಟಿಗೆ ಆರೋಗ್ಯವಂತರಾದ ಭಾನುಮತಿ ಆ ನಿರ್ಧಾರವನ್ನು ತೆಗೆದುಕೊಂಡು ಅಪ್ಪಾಜಿ ಅವರ ನಿಧನದ ಮುಂಚಿತ
ಹಲವಾರು ವರ್ಷಗಳನ್ನು ಗುಣಾತ್ಮಕ ಬದುಕಿನಲ್ಲಿ ಕಳೆದು ನೆಮ್ಮದಿಯನ್ನು ಪಡೆದುಕೊಂಡರು. ಈಗ ಭಾರತದಲ್ಲಿ ಆರೋಗ್ಯ ಸೌಲಭ್ಯಗಳು ಎಂದಿಗಿಂತ ಇಂದು ಚೆನ್ನಾಗಿವೆ. ಬ್ರಿಟನ್ನಿನ ರಾಷ್ಟ್ರೀಯ ಆರೋಗ್ಯ ಸಂಸ್ಥೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಕುಂದು ಕೊರತೆಗಳು ಹಿರಿಯ ನಾಗರೀಕರಿಗೆ ಅಸಮಾಧಾನವನ್ನು ಮತ್ತು ಆತಂಕವನ್ನು ಉಂಟುಮಾಡುತ್ತಿದೆ. ಹೀಗಿರುವಾಗ ಭಾರತದಲ್ಲಿ, ನಮ್ಮದೇ ನಾಡಿನಲ್ಲಿ ನಮ್ಮ ಸಂಧ್ಯಾಕಾಲವನ್ನು ಕಳೆಯುವುದು ಸಾಧ್ಯ ಎಂಬ ಅರಿವು ಉಂಟಾಗುತ್ತಿದೆ. ಎಲ್ಲ ದೇಶಗಳಲ್ಲೂ ಅಲ್ಲಲ್ಲಿಯ ಸಮಸ್ಯೆಗಳು ಇರುತ್ತವೆ. ಒಬ್ಬರಿಗೆ ಒಂದು ಆಯ್ಕೆ ಸೂಕ್ತವಾಗಿದ್ದಲ್ಲಿ ಅದು ಇನ್ನೊಬ್ಬರಿಗೆ ಅನುಕೂಲವಾಗದಿರಬಹುದು. ಹೀಗಾಗಿ ಅನಿವಾಸಿ ಹಿರಿಯರು ತಮ್ಮ ವೃದ್ಧಾಪ್ಯದಲ್ಲಿ ಎಲ್ಲಿ ಖಾಯಂ ಆಗಿ ನೆಲಸಬೇಕು ಎಂಬ ವಿಚಾರವನ್ನು ಅವರವರ ವೈಯುಕ್ತಿಕ ಅರೋಗ್ಯ, ಸಾಂಸಾರಿಕ ನೆಂಟುಗಳು, ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿಗಳು ನಿರ್ಧರಿಸುತ್ತವೆ.

ನಾನು ಕಂಡಿರುವ ಹಿರಿಯರ ಮನೆ ಸಮುಚ್ಛಯಗಳಲ್ಲಿ ಪ್ರೈಮಸ್ ಬಹಳ ಅನುಕೂಲವಾಗಿ ಉತ್ತಮ ಗುಣಮಟ್ಟದ್ದಾಗಿದೆ. ಇದು ಬೆಂಗಳೂರಿನ ಹೊರವಲಯದಲ್ಲಿದ್ದು ಪ್ರಶಾಂತವಾಗಿದೆ. ಕನಕಪುರ ರಸ್ತೆಯಲ್ಲಿರುವ ರವಿ ಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಆಸುಪಾಸಿನಲ್ಲಿದೆ. ಇಲ್ಲಿ ಒಟ್ಟಾರೆ ೧೬೩ ಫ್ಲ್ಯಾಟ್ಗಳಿವೆ. ಫ್ಲ್ಯಾಟ್ಗಳನ್ನು ಕೊಂಡು ಅಲ್ಲಿ ವಾಸವಾಗಿರಬಹುದು. ಕೆಳಹಂತದಲ್ಲಿರುವ ಭೋಜನ ಶಾಲೆಯಲ್ಲಿ ಊಟ, ಉಪಹಾರ
ಇವುಗಳ ವ್ಯವಸ್ಥೆ ಇದೆ. ಕಟ್ಟಡದ ಸುತ್ತು ವಿಹರಿಸಲು ಸಾಧ್ಯವಿದೆ, ಅಲ್ಲೇ ಒಂದು ಸಣ್ಣ ದೇವಸ್ಥಾನವಿದೆ, ಲೈಬ್ರರಿ ಇದೆ, ಈಜುಕೊಳವಿದೆ, ಮತ್ತು ಒಂದು ಸಾರ್ವಜನಿಕ ಸಭಾಂಗಣವಿದೆ. ಈ ಸಮುಚ್ಚಯದಲ್ಲೇ ಒಂದು ಸಣ್ಣ ಅರೋಗ್ಯ ಕೇಂದ್ರವಿದ್ದು, ಬೆಳಗಿನಿಂದ ಸಂಜೆಯವರೆಗೆ ಒಬ್ಬ ವೈದ್ಯರಿರುತ್ತಾರೆ, ಉಳಿದಂತೆ ಒಬ್ಬ ನಿವಾಸಿ ನರ್ಸ್ ಇರುತ್ತಾರೆ.
ಇಲ್ಲಿಯ ನಿವಾಸಿಯೊಬ್ಬರು ಆಸ್ಪತ್ರೆಗೆ ಸೇರುವ ಸಂದರ್ಭ ಉಂಟಾದಲ್ಲಿ ಈ ಸಂಸ್ಥೆಗೇ ಸೇರಿದ ಆಂಬುಲೆನ್ಸ್ ಸೌಲಭ್ಯವಿದೆ. ರೋಗಿಯನ್ನು ವರ್ಗಾಯಿಸಿ ಆಸ್ಪತ್ರೆಗೆ ನೋಂದಾಯಿಸುವ ತನಕ, ಸಂಸ್ಥೆ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೆ. ಹೀಗಾಗಿ ಮಕ್ಕಳು ಅಥವಾ ಸಂಬಂಧಿಗಳು ಬರುವವರೆಗೆ ಕಾಯುವ ಅವಶ್ಯಕತೆ ಇಲ್ಲ.

ಇಲ್ಲಿ ದೀಪಾವಳಿ, ರಾಜ್ಯೋತ್ಸವ ಸಮಾರಂಭಗಳು, ಪ್ರವಚನಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಕಳೆದ ವರ್ಷ ನನ್ನ ಪುಸ್ತಕದ ಬಗ್ಗೆ, ನನ್ನ ಸಮ್ಮುಖದಲ್ಲಿ ಒಂದು ಸಾಹಿತ್ಯ ಸಂವಾದವನ್ನು ಏರ್ಪಡಿಸಲಾಗಿತ್ತು ಎಂಬುದನ್ನು ಇಲ್ಲಿ ನೆನೆಯುತ್ತೇನೆ. ಈ ಹಿರಿಯರು ಸಂಗೀತ, ನೃತ್ಯ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರೂ ಪಾಲ್ಗೊಳ್ಳುತ್ತಿದ್ದಾರೆ ಎಂಬುದು ವಿಶೇಷವಾದ ಸಂಗತಿ.

ಡಾ. ಭಾನುಮತಿಯವರು ಉತ್ತಮ ಸಂಘಟಕರು. ಹಿಂದೆ ಅವರು ಕನ್ನಡ ಬಳಗದ ಸಕ್ರಿಯ ಅಧ್ಯಕ್ಷರಾಗಿ ಅನೇಕ ಪ್ರತಿಷ್ಠಿತ ಕಾರ್ಯಕ್ರಮಗಳನ್ನು, ಮೈಲಿಗಲ್ಲು ಸಂಭ್ರಮಗಳನ್ನು ಆಯೋಜಿಸಿದ್ದಾರೆ, ಅವರು ಬಹಳ ಕ್ರಿಯಾಶೀಲರು. ಅವರು ಬೆಂಗಳೂರಿನ ಪ್ರೈಮಸ್ ಸಂಸ್ಥೆಯಲ್ಲಿ ಇದೇ ಕ್ರಿಯಾಶೀಲತೆಯನ್ನು ಇತರರೊಂದಿಗೆ ಹಂಚಿಕೊಂಡು ಉತ್ತಮವಾದ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದಾರೆ. ಅವರ ನೇತೃತ್ವದಲ್ಲಿ ಅನೇಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಹಿರಿಯರೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಹಿರಿಯರು ಬದುಕಿನ ಪ್ರೀತಿಯನ್ನು ಉಳಿಸಿಕೊಂಡು, ಜೀವನೋತ್ಸಾಹದಲ್ಲಿ ಬದುಕುತ್ತಿರುವುದು ಶ್ಲಾಘನೀಯ. ಜೀವನದ ಸಂಧ್ಯಾಕಾಲದಲ್ಲಿ ಮೂಡುವ ಜಿಗುಪ್ಸೆ, ವೈರಾಗ್ಯ, ಒಂಟಿತನ, ಖಿನ್ನತೆಯನ್ನು ತರಬಹುದು. ಆದರೆ ಈ ಹಿರಿಯರು ತಮ್ಮ ಕಷ್ಟಗಳನ್ನು ಹತ್ತಿಕ್ಕಿ ತಮ್ಮ ಬದುಕನ್ನು ತಮಗೆ ಬೇಕಾದಂತೆ ರೂಪಿಸಿಕೊಂಡು ಖುಷಿಯಾಗಿದ್ದಾರೆ. ಇದು ಮೆಚ್ಚಬೇಕಾದ ಸಂಗತಿ. ಈ ಹಿರಿಯರಲ್ಲಿ ಒಂದು ನೆಮ್ಮದಿ ಇದೆ, ಸಂತೃಪ್ತಿ ಇದೆ ಎಂಬುದು ನನ್ನ ಗ್ರಹಿಕೆ. ಇಲ್ಲಿ ಒಬ್ಬರಿಗಿನೊಬ್ಬರು ಆಸರೆಯಾಗಿದ್ದಾರೆ. ಇಲ್ಲಿ ಪರಸ್ಪರ ಸಂಪರ್ಕ, ಪ್ರೀತಿ, ಕಾಳಜಿ ಮತ್ತು ವಿಶ್ವಾಸಗಳಿವೆ. ಎಲ್ಲರಿಗೂ ಎಲ್ಲರ ಪರಿಚಯವಿದೆ. ಒಂದು ರೀತಿ ನಮ್ಮ ಯು.ಕೆ ಕನ್ನಡ ಬಳಗದ ಸಮುದಾಯವಿದ್ದಂತೆ ಎನ್ನ ಬಹುದು. ನಾನು ಇಲ್ಲಿಗೆ ಎರಡು ಬಾರಿ ಭೇಟಿ ನೀಡಿದ್ದೇನೆ ಮತ್ತು ಇವರ ಒಡನಾಟವನ್ನು ಕಂಡಿದ್ದೇನೆ. ಅಪ್ಪಾಜಿ ಅವರು ವೀಲ್ ಚೇರಿನಲ್ಲಿ ಒಮ್ಮೆ ಭೋಜನ ಶಾಲೆಗೆ ಬಂದಾಗ ಅಲ್ಲಿಯ ಇತರ ನಿವಾಸಿಗಳು ಬಂದು ಅವರ ಆರೋಗ್ಯವನ್ನು ವಿಚಾರಿಸಿಕೊಂಡು ಆತ್ಮೀಯ ಕುಶಲೋಪರಿಯಲ್ಲಿ ತೊಡಗಿದ್ದು ನನಗೆ ಇಂದಿಗೂ ನೆನಪಿದೆ. ಇಲ್ಲಿ ಹಿರಿಯರಿಗೆ ಸಾಂಸ್ಕೃತಿಕ, ಆಧ್ಯಾತ್ಮಿಕ, ಸಾಹಿತ್ಯಿಕ ಅನುಭವ ದೊರೆಯುತ್ತಿದೆ. ಈ ರೀತಿಯ ಒಂದು ಗುಣಮಟ್ಟದ ಆತ್ಮೀಯ ಬದುಕನ್ನು ಬ್ರಿಟನ್ನಿನ ಯಾವುದೇ ನರ್ಸಿಂಗ್ ಹೋಮ್ ಗಳಲ್ಲಿ ನಿರೀಕ್ಷಿಸುವುದು ಸಾಧ್ಯವಿಲ್ಲ. ಎಲ್ಲ ಸೌಲಭ್ಯಗಳು ದೊರೆತರು ಆ ಸಾಂಸ್ಕೃತಿಕ ಕೊರತೆ ನೀಗುವುದಿಲ್ಲ ಎಂಬುದು ಸತ್ಯ.

ಬ್ರಿಟನ್ನಿನಲ್ಲಿ ಮುಂದಕ್ಕೆ ಕನ್ನಡ ಬಳಗವೇ ಒಂದು ಹಿರಿಯರ ಮನೆಯನ್ನು ಕಟ್ಟ ಬಹುದಲ್ಲವೇ? ಎಂಬ ಆಲೋಚನೆ ನನ್ನ ಮನಸ್ಸಿನಲ್ಲಿ ಹಾದುಹೋಗಿದೆ. ಅದರ ಬಗ್ಗೆ ಎಲ್ಲ ಅನಿವಾಸಿ ಹಿರಿಯರು ಚಿಂತಿಸಬೇಕಾಗಿದೆ. ನಮ್ಮ ಕನ್ನಡ ಬಳಗದ ಅದೆಷ್ಟೋ ಹಿರಿಯರಿಗೆ ಬೆಂಗಳೂರಿನಲ್ಲಿ ಹೋಗಿ ಖಾಯಂ ಆಗಿ ನೆಲೆಸುವ ಆಸೆ ಇದ್ದರೂ ಅಲ್ಲಿ ಹೋಗಿ ಬದುಕಬಲ್ಲೆವು ಎಂಬ ಆತ್ಮ ವಿಶ್ವಾಸ ಇಲ್ಲದಿರಬಹುದು ಮತ್ತು ಬ್ರಿಟನ್ನಿನಲ್ಲಿರುವ ತಮ್ಮ ಮಕ್ಕಳನ್ನು ಮತ್ತು ಮೊಮ್ಮಕ್ಕಳನ್ನು ತೊರೆದು ಹೋಗುವುದು ಕಷ್ಟವಿರಬಹುದು. ಈ ಒಂದು ಹಿನ್ನೆಲೆಯಲ್ಲಿ ಬ್ರಿಟನ್ನಿನಲ್ಲಿ ನೆಲೆಸಿರುವ ಭಾರತೀಯರೇ, ಭಾರತೀಯರಿಗಾಗಿ ನಡೆಸ ಬಹುದಾದ ನರ್ಸಿಂಗಹೋಮ್ ಗಳ, ಸಂಧ್ಯಾ ದೀಪಗಳ ಅಗತ್ಯವಿದೆ.

ನಾನು ಇಲ್ಲಿಯವರೆಗೆ 'ಸಂಧ್ಯಾದೀಪ' ಎಂಬ ಪದವನ್ನು ಹಿರಿಯರ ಮನೆ ಎಂಬುದನ್ನು ಸೂಚಿಸಲು ಒಂದು ರೂಪಕವಾಗಿ ಬಳೆಸಿದ್ದೇನೆ. ಇದಕ್ಕೆ ಇನ್ನೊಂದು ಕಾರಣವಿದೆ. ನನ್ನ ತಾಯಿ ರುದ್ರಾಣಿ ಅವರು ೩೦ ವರ್ಷಗಳ ಹಿಂದೆಯೇ ಸಂಧ್ಯಾದೀಪ ಎಂಬ ವೃದ್ಧಾ ಶ್ರಮವನ್ನು ಬೆಂಗಳೂರಿನಲ್ಲಿ ಹುಟ್ಟು ಹಾಕಿದ್ದು ಅದು ಇಂದಿಗೂ ವೃದ್ಧರಿಗೆ ಆಶ್ರಯ ನೀಡುತ್ತಾ ಬಂದಿದೆ. ಆ ಸಂಸ್ಥೆಗೆ ನಾನು ಪ್ರೀತಿಯಿಂದ ಬರೆದುಕೊಟ್ಟ ಕವನವನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ. ಈ ಒಂದು ಬರಹಕ್ಕೆ ನನ್ನ ಈ ಕವಿತೆ ಹೊಂದುವಂತಿದೆ ಎಂದು ಭಾವಿಸುತ್ತೇನೆ.

ಸಂಧ್ಯಾ ದೀಪ
ಡಾ. ಜಿ. ಎಸ್. ಶಿವಪ್ರಸಾದ್

ಪ್ರೀತಿ ವಾತ್ಸಲ್ಯದ ಸಂಧ್ಯಾದೀಪ
ಕರುಣೆಯ ಕುಡಿಯಲಿ ಉರಿಯುವ ದೀಪ
ಭರವಸೆ ನೀಡುವ ನಂದಾ ದೀಪ
ಕಾರ್ಮೋಡದ ಸಂಜೆಯ ದಾರಿಯ ದೀಪ

ಸವೆದಿಹ ಕೀಲಿಗೆ, ಮಬ್ಬಿನ ಕಣ್ಣಿಗೆ
ನಡುಗುವ ಕೈಯಿಗೆ, ಬಾಗಿದ ಬೆನ್ನಿಗೆ,
ಅಂದಿನ ತಪ್ಪಿಗೆ, ಇಂದಿನ ಮುಪ್ಪಿಗೆ
ಇನ್ನಿಲ್ಲ ಶಾಪ, ಪರಿತಾಪ

ಕಂಡರಿಯದ ಊರಿಗೆ ದೂರದ ಪಯಣ
ಬಸವಳಿದವರಿಗಿದು ಕೊನೆಯ ನಿಲ್ದಾಣ
ನಿರೀಕ್ಷೆಗೆ ಜಿಗುಪ್ಸೆಗೆ ವಿಶ್ರಾಂತಿಯ ತಾಣ
ಮಮತೆ ಆರೈಕೆಯ ಚಿಲುಮೆ ಇದು ಕಾಣ.
*
ವೃದ್ಧಾಪ್ಯದ ಬಗ್ಗೆ ಇನ್ನೊಂದು "ಅಂದು -ಇಂದು" ಎಂಬ ಪದ್ಯವನ್ನು ಇಲ್ಲಿ ಪ್ರಕಟಿಸಲಾಗಿದೆ. 

ಈ ಪದ್ಯವನ್ನು ಮೈಸೂರಿನಲ್ಲಿ ನೆಲೆಸಿರುವ ರೆಡಿಯಾಲಜಿಸ್ಟ್ ಡಾ. ರಘುನಾಥ್ ಅವರು ಅಂತರ್ಜಾಲದಲ್ಲಿ ಕಂಡ ಇಂಗ್ಲಿಷ್ ಪದ್ಯದಿಂದ ಪ್ರೇರಿತಗೊಂಡು ರಚಿಸಿದ್ದಾರೆ. ಇದನ್ನು ಹಂಚಿಕೊಂಡ ನಮ್ಮ ಬಳಗದ ಸದಸ್ಯರಾದ ಡಾ.ಮಂದಗೆರೆ ವಿಶ್ವನಾಥ್ ಅವರಿಗೆ ಕೃತಜ್ಞತೆಗಳು. ಪದ್ಯವು ಈ ಸಂದರ್ಭಕ್ಕೆ ಉಚಿತವಾಗಿದೆ ಎಂದು ಭಾವಿಸುತ್ತೇನೆ.

ಅಂದು – ಇಂದು
ಡಾ. ರಘುನಾಥ್

ಏಳುವುದೇ (ನಿದ್ದೆಯಿಂದ) ಕಷ್ಟ
ಈಗ ನಿದ್ದೆ ಮಾಡುವುದೇ ಕಷ್ಟ

ಆಗೆಲ್ಲ ಮೊಡವೆಯ ಯೋಚನೆ
ಈಗೆಲ್ಲ ಸುಕ್ಕಿನ ಯೋಚನೆ

ಅಂದು ಯಾರೂ ನಮಗೆ ಬೇಡ
ಇಂದು ಯಾರಾದರೂ ಇದ್ದರೆ ಸಾಕು

ಅಂದು ಯಾರ ಕೈ ಹಿಡಿಯಲೆಂದು
ಇಂದು ಯಾರಾದರೂ ಕೈ ಹಿಡಿದರೆ ಸಾಕೆಂದು

ಅಂದು ಸುಂದರತೆ ನೋಡುವ ತವಕಾಟ
ಇಂದು ನೋಡಿದರಲ್ಲಿ ಸುಂದರತೆ ಕಾಣುವ ಸೆಣಸಾಟ

ಅಂದು ನಾನೇ ಎಂದಿಗೂ
ಇಂದು ನನ್ನ ಸರದಿ ಎಂದಿಗೂ

ಅಂದು ಎಲ್ಲರ ಹೃದಯ ಮಿಡಿತ ನಾನೇ
ಇಂದು ಅದು ನಿಂತಿತೆಂಬ ಭಾವನೆ

*
ಕನ್ನಡ ರಾಜ್ಯೋತ್ಸವ; ಕೆಲವು ಐತಿಹಾಸಿಕ ಹಿನ್ನೆಲೆಗಳು

ಶ್ರೀಮತಿ ಪುಷ್ಪ , ಪ್ರೈಮಸ್ ಹಿರಿಯರ ಮನೆ

ಡಿ.ಎಲ್ ಪುಷ್ಪ ಅವರ ಪರಿಚಯ ಅವರ ಮಾತುಗಳಲ್ಲೇ ಹೀಗಿದೆ:
"ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ವೈದ್ಯರಾಗಿದ್ದ ನನ್ನ ತಂದೆಯವರಿಗಿದ್ದ ಕನ್ನಡ ಸಾಹಿತ್ಯದ ಆಳವಾದ ಅರಿವು ನನ್ನ ಮೇಲೆ ಪ್ರಭಾವ ಬೀರಿತು.ತಾಯಿಯವರಿಂದ ದೇವರನಾಮಗಳನ್ನು ಕಲಿತೆ. ಕನ್ನಡ ಮಾಧ್ಯಮ ದಲ್ಲಿ ಶಿಕ್ಷಣ ಪಡೆದ ನನಗೆ ಕನ್ನಡ ಕಾದಂಬರಿಗಳನ್ನು ಓದುವ ಹವ್ಯಾಸವಿತ್ತು. ಭಾವಗೀತೆಗಳನ್ನು ರೇಡಿಯೋದಲ್ಲಿ ಕೇಳಿ ಕಲಿಯುತ್ತಾ ಶ್ರೀಮತಿ ಎಚ್.ಆರ್.ಲೀಲಾವತಿಯವರ ಅಭಿಮಾನಿಯಾದೆ. ಸಂಗೀತ ಸ್ವಲ್ಪ ಗೊತ್ತು. ಮುಂದೆ ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸುವಾಗಲೂ.ಕನ್ನಡದ ಪತ್ರಗಳಿಗೆ ಕನ್ನಡದಲ್ಲೇ ಉತ್ತರಿಸುತ್ತಿದ್ದೆ. ಈಗ ಸ್ವಲ್ಪ ಮಟ್ಟಿಗಾದರೂ ಕನ್ನಡ ಓದುವ ಭಾವಗೀತೆ ಕೇಳುವ ಹಾಡುವ ಹವ್ಯಾಸಗಳು ನನ್ನ ಬಾಳನ್ನು ಮುನ್ನಡೆಸುವ ಶಕ್ತಿಗಳಾಗಿವೆ"

***

ಕರ್ನಾಟಕ ರಾಜ್ಯೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಒಂದು ಸುಧೀರ್ಘ ಹೋರಾಟದ ಕಥೆ ಇದೆ. ಅಪಮಾನನವನ್ನು ಸಹಿಸಿದೇ ಸ್ವಾಭಿಮಾನವನ್ನು ಉಳಿಸಿಕೊಳ್ಳುವಲ್ಲಿ ಕನ್ನಡ ಸಂಸ್ಕೃತಿ ಉದಯವಾಗಿದೆ. ಪಲ್ಲವ ಕ್ಷತ್ರಿಯರಿಂದ ಆದ ಅಪಮಾನವನ್ನು ಸಹಸಿಕೊಳ್ಳದೇ ಸ್ವಾಭಿಮಾನದ ಕಿಚ್ಚಿನಿಂದ "ಶರ್ಮ" ಎಂಬ ಬ್ರಾಹ್ಮಣ ಸೂಚಿಕ ಪದವನ್ನು ತ್ಯಜಿಸಿ ಖಡ್ಗ ಹಿಡಿದು ಸೈನ್ಯ ಕಟ್ಟಿ ಹೋರಾಡಿ ಜಯಶೀಲನಾದವನೇ "ಮಯೂರ ವರ್ಮಾ", ಕನ್ನಡಿಗ ರಾಜವಂಶ ಕದಂಬರ ದೊರೆ. ಒಂದು ಸಂಸ್ಕೃತಿಯಂದರೆ ಆ ಜನಾಂಗದ ಜೀವನ ವಿಧಾನ, ಅದರ ಚರಿತ್ರೆ. ಸ್ವಾಭಿಮಾನ ಹಾಗೂ ಸಮದೃಷ್ಟಿಯುಳ್ಳವರಾಗಿದ್ದು, ಶೂರರು, ಉದಾರ ಹೃದಯಗಳೂ ಆಗಿದ್ದ ಚಾಲುಕ್ಯರು, ಹೊಯ್ಸಳರು ಮತ್ತು ರಾಷ್ಟ್ರಕೂಟ ದೊರೆಗಳ ಆಳ್ವಿಕೆಯಲ್ಲಿ ಸ್ವಂತಿಕೆಯನ್ನು ಮತ್ತು ಆತ್ಮವಿಶ್ವಾಸವನ್ನು ಬೆಳಸಿಕೊಂಡು ಕರ್ನಾಟಕ ಸಂಸ್ಕೃತಿ ರೂಪುಗೊಂಡಿತು. "ಮನುಷ್ಯ ಜಾತಿ ತಾನೊಂದೆ ವಲಂ" ಎಂಬುದು ಆದಿ ಕವಿ ಪಂಪನ ಮಾತು. ಮನುಷ್ಯವರ್ಗವೆಲ್ಲ ಒಂದು ಎಂಬ ತತ್ವವನ್ನು ತಮ್ಮ ಧರ್ಮದ ಚೌಕಟ್ಟಿನಲ್ಲೆ ಕನ್ನಡ ಜನ ಕಂಡಿದ್ದಾರೆ. ದಯೆಯೇ ಧರ್ಮದ ಮೂಲವೆಂದು ಬಸವಣ್ಣ ಹೇಳಿದ್ದರೆ, ಹೊಲಯ ಹೊರಗಿಹನೇ? ಊರೊಳಗಿಲ್ಲವೇ? ಎಂದು ಪುರಂದರದಾಸರು ಹೇಳಿದ್ದಾರೆ.

ಧಾರ್ಮಿಕ ಸಮನ್ವಯವಿದ್ದ ಕನ್ನಡನಾಡಿನಲ್ಲಿ ಶೈವ, ವೈಷ್ಣ , ಭೌದ್ಧ ,ಜೈನ ಮತಗಳ ಅಭಿವೃದ್ಧಿ ಹೊಂದಿದವು. ಅಪ್ರತಿಮ ಶಿಲ್ಪಕಲೆಯನ್ನೂಳಗೊಂಡ, ಬಾದಾಮಿ, ಐಹೊಳೆ ,ಪಟ್ಟದಕಲ್ಲು, ಬೇಲೂರು, ಹಳೇಬೀಡುಗಳ ದೇವಾಲಯಗಳು ನಿರ್ಮಾಣವಾದವು. ಪುರಂದರದಾಸರಂತ ವಾಗ್ಮಿಗಳಿಗೆ ಮತ್ತು ಪಂಪ, ರನ್ನ ಜನ್ನ , ನಾಗವರ್ಮ ಮತ್ತು ಕುಮಾರವ್ಯಾಸರಂಥ ಮಹಾ ಕವಿಗಳಿಗೆ ಜನ್ಮ ಕೊಟ್ಟ ನಾಡಿದು. ವಚನ ಸಾಹಿತ್ಯದ ಮೂಲಕ ಸಾಮಾಜಿಕ ಸಾಮಾನತೆಯನ್ನು ಸಾರಿದ ಬಸವಣ್ಣ, ಅಲ್ಲಮಪ್ರಭು ,ಅಕ್ಕಮಹಾದೇವಿಯವರನ್ನು ಹೇಗೆ ಮರೆಯಲಾದೀತು? ಹೀಗೆ ಎಲ್ಲ ರಂಗಗಳಲ್ಲಿಯೂ ಉಚ್ಛ್ರಾಯ ಸ್ಥಿತಿಯಲ್ಲಿದ್ದ ಕನ್ನಡ ಪ್ರದೇಶಗಳು ವಿಜಯನಗರ ಸಾಮ್ರಾಜ್ಯ ಪತನದ ನಂತರ ಕನ್ನಡಿಗರ ಕೈ ತಪ್ಪಿ ಮುಂಬೈ, ಹೈದರಾಬಾದ್, ಮದ್ರಾಸ್ ಪ್ರಾಂತ್ಯಗಳಲ್ಲಿ ಹಂಚಿಹೋದವು. ಕನ್ನಡಿಗರು ಎರಡನೇ ದರ್ಜೆಯ ಪ್ರಜೆಗಳಾದರು. ಭೌಗೋಳಿಕವಾಗಿ ಒಂದಾಗಬೇಕಾದ ಅವಶ್ಯಕತೆ ಉಂಟಾಯಿತು. ಹೀಗಾಗಿ ೧೯ನೇ ಶತಮಾನದ ಉತ್ತರಾರ್ಧದಲ್ಲಿ ಪ್ರಾಜ್ಞರಾದವರು, ಸಾಹಿತಿಗಳು, ಕವಿಗಳು, ಕನ್ನಡ ಪತ್ರಿಕೆಗಳು, ಕನ್ನಡ ಸಂಘಟನೆಗಳು, ಕಲಾವಿದರು, ಕೃಷಿಕರು, ಸಾಮಾನ್ಯ ಜನರೆಲ್ಲರೂ ತಾವು ಒಂದುಗೂಡಬೇಕೆಂದು ಯೋಚಿಸಿ ಭಾವನಾತ್ಮಕವಾಗಿ ಹಾಗೂ ವೈಚಾರಿಕವಾಗಿ ಒಗ್ಗಟ್ಟಿನಿಂದ ಒಂದು ಚಳುವಳಿ ಪ್ರಾರಂಭಿಸಿದರು.

ಹೀಗೆ "ಕರ್ನಾಟಕ ಏಕೀಕರಣಕ್ಕಾಗಿ" ನಡೆದ ಚಳುವಳಿಯಲ್ಲಿನ ಕೆಲವು ಮುಜಲುಗಳನ್ನು ಗುರುತಿಸುವುದಾದರೆ ಭಾರತ ಸ್ವತಂತ್ರ ಹೋರಾಟದ ಜೊತೆ ಜೊತೆಗೆ ಸಮಾನಾಂತರವಾಗಿ ಕರ್ನಾಟಕ ಏಕೀಕರಣಕ್ಕಾಗಿ ಹೋರಾಟ ನಡೆಯಿತು. ಅವು ಹೀಗಿವೆ;

೧)ಪ್ರಮುಖ ಸಾಹಿತಿಗಳಾದ ಆಲೂರು ವೆಂಕಟರಾವ್ (ಕನ್ನಡ ಕುಲ ಪುರೋಹಿತ ) ಅವರನ್ನು ಏಕೀಕರಣದ ಶಿಲ್ಪಿ ಎನ್ನಬಹುದು. ೧೯೦೭/೮ ರಲ್ಲಿ ಧಾರವಾಡದಲ್ಲಿ ಕನ್ನಡ ಲೇಖಕರ ಸಮ್ಮೇಳನ ನಡೆಸಿ ಲೇಖಕರು ತಮ್ಮ ಬರಹದ ಮೂಲಕ ಏಕೀಕರಣ ಚಳುವಳಿಯನ್ನು ಬೆಳಸುವಂತೆ ಕರೆ ನೀಡಿದರು. ಅವರ ಕಾದಂಬರಿ "ಕರ್ನಾಟಕ ಗಥ ವೈಭವ "ಏಕೀಕರಣದ ಬೈಬಲ್ " ಎಂದು ಹೇಳಲಾಗುತ್ತದೆ.

೨) ಮೈಸೂರು ಸಂಸ್ಥಾನದ ರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದಿವಾನ್ ಸರ್ ಎಂ ವಿಶ್ವೇಶ್ವರಯ್ಯನವರು ೧೯೧೫ ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿ ಏಕೀಕರಣದ ಪರಿಕಲ್ಪನೆಗೆ ನಾಂದಿ ಹಾಡಿದರು.

೩) ೧೯೨೪ರಲ್ಲಿ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಹುಯಲುಗೊಳ ನಾರಾಯಣರಾಯರ "ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು" ಗೀತೆಯನ್ನು ಪ್ರಾರ್ಥನೆಗೆ ಹಾಡಲಾಯಿತು. ಇದನ್ನೇ ಮುಂದೆ ಏಕೀಕರಣ ಗೀತೆಯಾಗಿ ಗುರುತಿಸಲಾಯಿತು.

೪)೧೯೨೬ರಲ್ಲಿ ಹಿಂದೂಸ್ತಾನ್ ಸೇವಾದಳದ ಎನ್. ಎಸ್ ಹರ್ಡಿಕರ್ ನೇತೃತ್ವದಲ್ಲಿ ಏಕೀಕರಣಕ್ಕೆ ಹಸ್ತಾಕ್ಷರ ಚಳುವಳಿ ನಡೆಯಿತು. ೧೯೪೭ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದಿತು. ೧೯೫೬ರಲ್ಲಿ ಭಾಷಾವಾರು ಪ್ರಾಂತ್ಯಗಳ ವಿಂಗಡಣೆಯಾಗಿ ನವಂಬರ್ ೧ನೇ ದಿನಾಂಕದಂದು ನವಮೈಸೂರು ರಾಜ್ಯ ಅಸ್ತಿತ್ವಕ್ಕೆ ಬಂದಿತು. ಮುಂದೆ ಕೆಂಗಲ್ ಹನುಮಂತಯ್ಯನವರ ಮತ್ತು ಎಸ್. ನಿಜಲಿಂಗಪ್ಪನವರ ಪ್ರಯತ್ನದಿಂದ ೧೯೭೩ರ ನವಂಬರ್ ೧ನೇ ದಿನಾಂಕ "ಕರ್ನಾಟಕ " ವೆಂದು ನಾಡಿಗೆ ನಾಮಕರಣವಾಯಿತು. ಪ್ರತಿ ವರ್ಷ ಕರ್ನಾಟಕದ ಗತ ವೈಭವ ಮತ್ತು ಸಂಸ್ಕೃತಿಯನ್ನು ನೆನೆಪಿಸುವ ಸಲುವಾಗಿ ಮಾತ್ರವಲ್ಲದೆ ಕನ್ನಡಿಗರಿಗೆ ಒಂದು ಆಸ್ಮಿತೆಯನ್ನೂ, ಅಸ್ತಿತ್ವವನ್ನು ತಂದುಕೊಟ್ಟ ಎಲ್ಲ ಮಹನೀಯರ ಸ್ಮರಣೆಗಾಗಿ ಈ ರಾಜ್ಯೋತ್ಸವ ಆಚರಣೆ ಮುಖ್ಯವಾಗುತ್ತದೆ.

ಈ ಬರಹದ ಹಸ್ತಪ್ರತಿಯನ್ನು ಟೈಪ್ ಮಾಡಿಕೊಟ್ಟ ಅನಿವಾಸಿ ಬಳಗದ ರಾಮಮೂರ್ತಿ ಅವರಿಗೆ ಕೃತಜ್ಞತೆಗಳು

*