ನಿದ್ದೆಯೇ ಜೀವನದ ಹೆಗ್ಗುರಿ!

ಪ್ರಿಯ ಓದುಗರೆ
ಅನಿವಾಸಿಯ ಕಟ್ಟೆಯಲ್ಲಿ ಮತ್ತೊಮ್ಮೆ ಹರಟೆಯನ್ನು ಹೊಡೆಯುವ ಪ್ರಯತ್ನವನ್ನು ಮಾಡಿರುವೆ . ಕಟ್ಟೆ ಹಳೆಯದಾದರೇನು
ಹರಟೆಯ ವಿಷಯ ಮಾತ್ರ ಹೊಸದು . ರುಚಿಯಾದ ಊಟ , ಮಲಗಲು ಒಂದು ಹಾಸಿಗೆ , ಸವಿಯಾದ ನಿದ್ದೆ ಇದ್ದರೆ ಸ್ವರ್ಗಕ್ಕೆ
ಕಿಚ್ಚು ಹಚ್ಚೆಂದ - ಎಂದು ಸರ್ವಜ್ಞನು ಹೇಳಿರಬಹುದಾಗಿತ್ತೇನೋ ? ಇವು ಮೂರು ಯಾರಿಗೆ ಇಷ್ಟವಿಲ್ಲ? ಅದರಲ್ಲೂ
ಸವಿಯಾದ ನಿದ್ದೆಯಲ್ಲಿ ಸವಿಗನಸು ಕಾಣುವ ಮಜಾನೆ ಬೇರೆ . ನಿದ್ದೆಯ ಕುರಿತು ನನ್ನ ಪ್ರಾಥಮಿಕ ಶಾಲೆಯಿಂದ ಇಲ್ಲಿಯವರೆಗಿನ
ಅನುಭವಗಳು ವಿಶಿಷ್ಟವಾಗಿದ್ದು , ಆ ಘಟನೆಗಳ ನೆನಪುಗಳನ್ನು ಆಗಾಗ್ಗೆ ಮೆಲಕಿಸಿಕೊಂಡು , ನನ್ನಷ್ಟಕ್ಕೆ ನಾನೇ ಎಷ್ಟೋ ಸಲ
ನಕ್ಕಿದ್ದುಂಟು . ಆ ಮೆಲಕುಗಳನ್ನು ಹರಟೆಯ ರೂಪದಲ್ಲಿ ನಿಮ್ಮ ಮುಂದೆ ಇಡಲು ಪ್ರಯತ್ನಿಸಿರುವೆ .ಬನ್ನಿ ಸಾಧ್ಯವಾದರೆ ಓದಿ ,
ಹಾಗೆಯೇ ನಿಮ್ಮ ಅನಿಸಿಕೆಯನ್ನು ಗೀಚಲು ಮರೆಯದಿರಿ . ---- ಇಂತಿ ನಿಮ್ಮ ಸಂಪಾದಕ

“ಹೊಟ್ಟೆ ತುಂಬ ಊಟ ಮಾಡು , ಕಣ್ಣು ತುಂಬಾ ನಿದ್ದೆ ಮಾಡು ಆಯುಷ್ಯ ಘಟ್ಟಿಯಾಗುತ್ತೆ “ಎಂದು ವೈದ್ಯರು ಮತ್ತು ಹಿರಿಯರು
ಉಪದೇಶ ಮಾಡುವದು ಹೊಸದೇನು ಅಲ್ಲ . ಸರಿಯಾದ ಊಟ ಮತ್ತು ನಿದ್ದೆ ಉತ್ತಮ ಆರೋಗ್ಯಕ್ಕೆ ಮೂಲ ಮಂತ್ರ .ಆದರೆ
ಅವರವರ ಭಾವಕ್ಕೆ — ಅವರವರ ಮನಸಿಗೆ ತಕ್ಕಂತೆ , ಇದಕ್ಕೆ ತಮ್ಮದೇ ಆದ ಅರ್ಥವನ್ನು ಹುಡಿಕಿಕೊಂಡವರಿಗೆ ಏನೂ
ಕೊರತೆಯಿಲ್ಲ . ಕೆಲವರು ಬದುಕುವದಕ್ಕಾಗಿ ತಿನ್ನುವವರಿದ್ದರೆ ಇನ್ನು ಕೆಲವರು ತಿನ್ನುವದಕ್ಕಾಗಿಯೇ ಬದುಕುವದುಂಟು .
ಪರ್ಯಾಯವಾಗಿ ಕೆಲವರು ಬದಕುವದಕ್ಕಾಗಿ ನಿದ್ದೆ ಮಾಡಿದರೆ ಇನ್ನೂ ಕೆಲವರು ನಿದ್ದೆ ಮಾಡುವದಕ್ಕೆಂದೇ ಬದುಕುವದುಂಟು .
ಊಟ ಮಾಡುವ ಪರಿಯಲ್ಲಿ ಎಷ್ಟೊಂದು ವೈವಿಧ್ಯತೆ ಇದೆಯೋ ಹಾಗೆಯೇ ನಿದ್ದೆ ಮಾಡುವ ರೀತಿಯಲ್ಲೂ ವಿಭಿನ್ನ ವಿವಿಧತೆ ಉಂಟು .
ಮಲಗಿ ನಿದ್ದೆ ಮಾಡುವದು ಸಹಜವಾದರೂ , ಕೆಲವರು ಕುಳಿತಲ್ಲಿಯೇ ನಿದ್ದೆ ಮಾಡಿ ಖುಷಿ ಪಡುವದುಂಟು . ಇಷ್ಟೇ ಸಾಲದೆಂದು
ಇನ್ನು ಕೆಲವರು ನಿಂತು ನಿದ್ದೆ ಮಾಡಿದರೆ , ಕೆಲವರಂತೂ ಅಡ್ಡಾಡಿಕೊಂಡೇ ನಿದ್ದೆ ಮಾಡಿ ತಾವು ಎಲ್ಲರಿಗಿಂತಲೂ ವಿಭಿನ್ನವೆಂದು ತೋರಿಸುವದುಂಟು . ಒಟ್ಟಿನಲ್ಲಿ ನಾದಮಯಾ — ಅಲ್ಲಲ್ಲ ಕ್ಷಮಿಸಿ , ನಿದ್ದೆಮಯಾ —– ಈ ಲೋಕವೆಲ್ಲಾ .
ಅಚ್ಚು ಕಟ್ಟಾದ ಹಾಸಿಗೆಯ ಮೇಲೆ ತಮಗೆ ಅನುಕೂಲವಾದ ಭಂಗಿಯಲ್ಲಿ ಎಂದರೆ – ಅಡ್ಡಬಿದ್ದು , ಡಬ್ಬು ಬಿದ್ದು , ಚಿತ್ತ ಬಿದ್ದು
ಮಲಗುವವರು ಸಹಜವಾಗಿ ಸಿಗುತ್ತಾರೆ . ‘ಅಚ್ಚು ಕಟ್ಟಾದ ಹಾಸಿಗೆ’ ಯ ಪದವನ್ನು ಅವರವರ ಭಾವನೆಯಂತೆ
ಅರ್ಥೈಯ್ಯಿಸಬಹುದು . ಬಡವರಿಗೆ ನೆಲದ ಮೇಲಿನ ಚಾಪೆಯೇ ಅಚ್ಚು ಕಟ್ಟಾದರೆ , ಬಲ್ಲಿದರಿಗೆ ಅಲಂಕೃತ ಮಂಚ ಅಚ್ಚು
ಕಟ್ಟಾಗಬಹುದು . ದುರದೃಷ್ಟವಶಾತ್ ಕೆಲವು ಬಲ್ಲಿದರಿಗೆ ಮಂಚ ಇದ್ದರೂ ಬೊಜ್ಜಿನ ಬಾಧೆಯಿಂದಲೋ , ಸೊಂಟದ
ನೋವಿನಿಂದಲೋ ಚಾಪೆಯೇ ಗತಿಯಾಗುವದು ಬೇರೆ ವಿಷಯ ಬಿಡಿ . “ಹಲ್ಲಿದ್ದರೆ ಕಡಲೆ ಇಲ್ಲ , ಕಡಲೆಯಿದ್ದರೆ ಹಲ್ಲಿಲ್ಲ”
ಎಂಬುವದು ನಿಜ ತಾನೇ ?
ಕೆಲವರು ನಿಶ್ಚಿಂತೆಯಿಂದ ಶಾಂತವಾಗಿ ಮಲಗಿದರೆ ಇನ್ನೂ ಕೆಲವರು ಘೋರವಾದ ಗೊರಕೆಯನ್ನು ಹೊಡೆದು ಅಕ್ಕ ಪಕ್ಕದವರ ,
ಅಷ್ಟೇ ಏಕೆ ಮನೆ ಮಂದಿಯ ನಿದ್ದೆಯನ್ನೆಲ್ಲಾ ಹಾಳು ಮಾಡಿ ಸುಖ ಪಡುವದೂ ಉಂಟು . ಪತಿರಾಯನ ಗೊರಕೆಯ ಕಾಟವನ್ನು
ತಾಳದೆ , ಗೊರಕೆಯನ್ನು ತಡೆಯುವ ಎಲ್ಲ ಉಪಾಯಗಳು ವಿಫಲವಾದಾಗ , ‘ ಸಾಕಪ್ಪಾ ಈ ಮಹಾರಾಯಣ ಸಹವಾಸವೆಂದು
‘ವಿವಾಹ ವಿಚ್ಛೇದನೆಗೆ ಮೊರೆ ಹೋದ ಹೆಂಗಳೆಯರಿಗೇನೂ ಕಡಿಮೆಯಿಲ್ಲ .

ಮಲಗಿ ನಿದ್ದೆ ಮಾಡುವವರದು ಈ ಕಥೆಯಾದರೆ ಇನ್ನು ಕುಳಿತು ನಿದ್ದೆ ಮಾಡುವವರ ವಿಷಯವೇ ಬೇರೆ ಬಿಡಿ . ನಾನು ನಮ್ಮ ಹಳ್ಳಿಯ ಪ್ರಾಥಮಿಕ ಶಾಲೆಯ ಮೂರನೆಯ ಕ್ಲಾಸಿನಲ್ಲಿ ಓದುವಾಗ ‘ಮೂಲಿಮನಿ ‘ ಮಾಸ್ತರರು ಅಂತ ಇದ್ದರು (ಈಗಲೂ ಇದ್ದಾರೆ ). ಅಂಕಿ ಮಗ್ಗಿಯನ್ನೇನೋ ಚನ್ನಾಗಿ ಹೇಳಿಕೊಡುತ್ತಿದ್ದರು ಎನ್ನಿ ! ಆದರೆ , ಅಷ್ಟೇ ಚನ್ನಾಗಿ ತರಗತಿಯಲ್ಲಿ ನಿದ್ದೆಯನ್ನೂ ಹೊಡೆಯುತ್ತಿದ್ದರು ಎಂಬುವದು ವಿಶೇಷ ವಿಷಯ . ಅರ್ಧ ಘಂಟೆಯವರೆಗೂಒಂದರಿಂದ ಇಪ್ಪತ್ತರವರೆಗಿನ ಮಗ್ಗಿಗಳನ್ನು ನಮ್ಮೆಲ್ಲರ ಬಾಯಿಯಿಂದ ಸರತಿಯ ಮೇಲೆ ಒದರಿಸಿ , ಕೊನೆಯ ಹುಡುಗ ಇಪ್ಪತ್ತಇಪ್ಪತ್ತಲೇ ನಾಕನೂರೋ —- ಅಂತ ಮುಗಿಸುವದರೊಳಗೆನೇ ನಿದ್ದೆ ಹೋಗಿ ಬಿಡುತ್ತಿದ್ದರು . ಹಳ್ಳಿಯ ಶಾಲೆಗಳಲ್ಲಿ ಮಕ್ಕಳು ಮಗ್ಗಿಯನ್ನು ಹೇಳುವ ಪರಿ ರಾಗ ಹಚ್ಚಿ ಹಾಡು ಹೇಳಿದಂತೆ ಇರುತಿತ್ತು ( ಈಗ ಹೇಗಿದೆ ಎಂದು ಗೊತ್ತಿಲ್ಲ) . ಅದರ ಇಂಪಿಗೆನೇ ಇವರಿಗೆ ನಿದ್ದೆ ಬರುತಿತ್ತೇನೋ ? ಎಂಬುದು ನನ್ನ ಈಗಿನ ಒಂದು ಅನುಮಾನಿತ ಶಂಕೆ . ಮೂಲಿಮನಿ ಮಾಸ್ತರರು ಕುರ್ಚಿಯ ಮೇಲೆ ಕಾಲು ಮುದುರಿಸಿಕೊಂಡು ಕುಳಿತು ನಿದ್ದೆ ಹೊಡೆಯಲು ಪ್ರಾರಂಭಿಸಿದರೆ ಲಂಗು ಲಗಾಮು ಇಲ್ಲದ ನಮಗೆಲ್ಲಾ ಖುಷಿಯೋ ಖುಷಿ . ನಮ್ಮೆಲ್ಲರ ಗುದ್ದಾಟ , ಕಿರುಚಾಟ , ಪರಚಾಟ , ಜಗಳಾಟ ಮತ್ತು ಅಳಲಾಟ ಕುರುಕ್ಷೇತ್ರದ ಯುದ್ಧಕ್ಕಿಂತಲೂ ಭಯಂಕರವಾಗಿರುತಿತ್ತು . ಆದರೂ ಇದರ ಕಿಂಚಿತ್ತೂ ಪರಿವೆ ಇಲ್ಲದೆ ಮಾಸ್ತರರ ನಿದ್ದೆ ಮುಂದುವರೆಯುತ್ತಿತ್ತು .ಕುಂಭಕರ್ಣನನ್ನು ಎಬ್ಬಿಸಲು ಅವನ ಪ್ರಜೆಗಳೆಷ್ಟು ಹರಸಾಹಸ ಮಾಡುತ್ತಿದ್ದರು ಎಂಬುದು ಎಲ್ಲರಿಗೂ ಗೊತ್ತಿದ್ದ ವಿಷಯವೇ , ಆದರೆ ನಾವೆಲ್ಲಾ ಅವರೆಲ್ಲರಿಗಿಂತ ಬಹಳೇ ಮೇಲು ಇದ್ದಿದ್ದೀವಿ ಎನ್ನಿ . ನಮ್ಮ ನಿರಂತರ ಗಲಾಟೆಯಿಂದ ಒಂದರ್ಧ ಘಂಟೆಯಲ್ಲಿ ಮಾಸ್ತರರನ್ನು ಎಬ್ಬಿಸುವಲ್ಲಿ ಸಫಲವಾಗುತಿದ್ದೆವು ಎಂಬುದು ಹೆಮ್ಮೆಯ ವಿಷಯ . ನಿದ್ದೆಯಿಂದ ಎದ್ದ ಮಾಸ್ತರರು ಟೇಬಲ್ ಮೇಲೆ ಇರುತ್ತಿದ್ದ ಬಡಿಗೆಯನ್ನೊಮ್ಮೆ ಕುಟ್ಟಿ ಮತ್ತೆ ಮಗ್ಗಿಯ ಸರದಿಗೆ ಹೋಗುತ್ತಿದ್ದರು. ಕಳೆದ ಸಲ ನಮ್ಮೂರಿಗೆ ಹೋದಾಗ ಮಾಸ್ತರರನ್ನು ಮಾತಾಡಿಸಿಕೊಂಡು ಬರೋಣವೆಂದು ಅವರ ಮನೆಗೆ ಹೋಗಿದ್ದೆ . ಕುಶಲೋಪಹಾರಿ ಮಾತುಗಳೆಲ್ಲ ಮುಗಿದ ಮೇಲೆ ಅವರೆಂದರು. ” ಯಾಕೋ ಶಂಕ್ರಪ್ಪ , ನಿದ್ದೀನ ಬರವಲ್ಲದು ಯಾವುದಾದ್ರೂ ಗುಳಿಗಿಯಿದ್ದರ ಬರದಕೊಡ್ ” ಎಂದು .
ಅದಕ್ಕೆ ತಕ್ಷಣವೇ ನಾನಂದೆ ” ಗುರುಗೋಳ್ ಸಾಲ್ಯಾಗ ಇದ್ದಾಗ್ನ ನಿಮ್ಮ ಜನ್ಮ ಪೂರ್ತಿಯ ನಿದ್ದಿ ಮಾಡಿ ಮುಗಿಸಿ ಬಿಟ್ಟಿರಿ ಈಗ ಹ್ಯಾಂಗ್ ನಿದ್ದಿ ಬರಬೇಕು ?” ಎಂದು . ‘ ನಿನ್ನ ಕುಚೇಷ್ಟೆಯನ್ನು ಇನ್ನೂ ಬಿಟ್ಟಿಲ್ಲವೆಂದು’ ಬೈದುಕೊಂಡು ಹೋಗಿಬಿಟ್ಟರು .

ಇನ್ನು ಪ್ರಾಥಮಿಕ ಸಾಲಿ ಮುಗಿಸಿ ಮಾಧ್ಯಮಿಕ ಸಾಲಿಗೆ ಅಂತ ಬೈಲಹೊಂಗಲಕ್ಕೆ ಬಂದಾಗ ‘ಉಳ್ಳಾಗಡ್ಡಿ ‘ಅಂತ ಇಂಗ್ಲಿಷ್
ಮಾಸ್ತರರು ಸಿಕ್ಕಿದ್ದರು . ಅವರು ಕ್ಲಾಸಿನಲ್ಲಿ ನಿದ್ದೆ ಮಾಡುತ್ತಿರಲಿಲ್ಲ ಬದಲು ಸ್ಟಾಫ್ ರೂಮಿನಲ್ಲಿ ಕುಳಿತು ಗಡದ್ದಾಗಿ ನಿದ್ದೆ
ಹೊಡೆಯುತ್ತಿದ್ದರು . ಸುಮಾರು ಸಲ ಅವರಿಗೆ ಕ್ಲಾಸ್ ಇದ್ದದ್ದೇ ಗೊತ್ತಿರುತ್ತಿರಲಿಲ್ಲ . ನಾವೇ ಹೋಗಿ ಸೂಕ್ಷ್ಮ ಪ್ರಯತ್ನ ಮಾಡಿ
ಎಬ್ಬಿಸಿಕೊಂಡು ಬರುತ್ತಿದ್ದೆವು . ಕಣ್ಣು ತಿಕ್ಕುತ್ತಾ ಬಂದರೂ , ಇಂಗ್ಲಿಷಿನಿಂದ ಕನ್ನಡಕ್ಕೆ ಅನುವಾದ ಮಾಡಿ ಮಸ್ತ ಕ್ಲಾಸ್
ತೆಗೆದುಕೊಳ್ಳುತ್ತಿದ್ದರು . ಪಾಠ ಮುಗಿದ ಮೇಲೆ ನಮ್ಮನ್ನು ಕುರಿತು “ನಿಮಗೆಲ್ಲಾ ವಿದ್ಯೆಯೇ ಜೀವನದ ಹೆಗ್ಗುರಿಯಾಗಬೇಕು ” ಎಂದು
ಜೋರಾಗಿ ಹೇಳುತ್ತಿದ್ದರೆ , ಕಡೆಯ ಬೆಂಚಿನಲ್ಲಿ ಕುಳಿತ ಕಿಡಗೇಡಿಗಳು. ” ಸಾರ್ , ನಿದ್ದೆಯೇ ಜೀವನದ ಹೆಗ್ಗುರಿಯಾಗಬೇಕೆಂದು ” ಇನ್ನಷ್ಟು ಜೋರಾಗಿ ಕೂಗುತ್ತಿದ್ದರು .
ಇದೇನು ಬರೀ ಗುರುಗಳ ಬಗ್ಗೆ ಇಷ್ಟೊಂದು ಬರೆಯುತ್ತಿದ್ದೀನಿ ಅಂತ ಬೇಜಾರು ಮಾಡಿಕೊಳ್ಳಬೇಡಿ . ಶಿಷ್ಯರೂ ಯಾವುದರಲ್ಲು
ಕಡಿಮೆ ಇಲ್ಲ . ‘ ಗುರುವಿನ ಗುಲಾಮನಾಗುವತನಕ ದೊರೆಯದಣ್ಣ ಮುಕುತಿ ‘ ಅಂತ ದಾಸರು ಹೇಳಿಲ್ಲವೆ ? , ‘ಶಿಷ್ಯನು ಗುರುವನ್ನು
ಮೀರಿಸಬೇಕೆಂದು’ ಎಷ್ಟೋ ಕಥೆಗಳಲ್ಲಿ ಸಾರಿಲ್ಲವೆ ? ಇದನ್ನು ಕಾಯಾ , ವಾಚಾ , ಮನಸಾ ಅಂತ ಪೂರೈಸುವ ಶಿಷ್ಯರ
ಗುಂಪೂ ಬಹಳ ದೊಡ್ಡದುಂಟು .ಎಲ್ಲ ಕಾಲೇಜುಗಳ ಕೊಠಡಿಯ ಕೊನೆಯ ಬೆಂಚಿನಲ್ಲಿ ಈ ಗುಂಪು ಸಹಜವಾಗಿ ಸಿಗುವದುಂಟು .
ನಾನೂ ಒಬ್ಬ ಆ ಗುಂಪಿನ ಸದಸ್ಯನೆಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ ( ನಿಜವಾಗಿಯೂ ?). ಕರ್ನಾಟಕ ಕಾಲೇಜಿನಲ್ಲಿ ಪಿ
ಯು ಸಿ ಓದುತ್ತಿರುವಾಗಿನ ಸಂದರ್ಭ . ಲಿಬರಲ್ ಹಾಸ್ಟೆಲಿನಲ್ಲಿದ್ದ ನಾವು ಎಂಟು ಜನ ಹುಡುಗರು ಬೆಳಿಗ್ಗೆ ಒಂಭತ್ತೂವರೆಗೆ ,
ಮೆಸ್ಸಿನಲ್ಲಿ ಹೊಟ್ಟೆತುಂಬ ತಿಂದು ಹತ್ತು ಘಂಟೆಗೆ ಕಾಲೇಜಿಗೆ ಹೋಗುತ್ತಿದ್ದೆವು . ಮೊದಲನೆಯದು ಇಂಗ್ಲಿಷ್ ಕ್ಲಾಸು . ಪ್ರೊಫೆಸರ್
ಮುಳಗುಂದ ಅವರು ‘ಚಾರ್ಲ್ಸ್ ಡಿಕ್ಷನ್ನ ‘ನ ‘ Great expectations’ ಕಾದಂಬರಿಯನ್ನು ಭಾವಪೂರ್ವಕವಾಗಿ ಚಿತ್ರಿಸುತ್ತಿದ್ದರೆ ,ಕೊನೆಯ ಬೆಂಚಿನಲ್ಲಿ ಕುಳಿತ ನಾವು ನಿದ್ರಾಲೋಕದಲ್ಲಿ ಮುಳುಗಿ ನಮ್ಮದೇ ಆದ ಹಗಲು ಕನಸು ಕಾಣುತ್ತಿದ್ದೆವು . ಕೊನೆಗೊಂದು
ದಿನ ಪ್ರೊಫೆಸ್ಸರ್ ನಮ್ಮನ್ನೆಲ್ಲ ತಮ್ಮ ಕಚೇರಿಗೆ ಕರೆದು ” ನೀವು ನಿದ್ದೆ ಮಾಡದೆ ನನ್ನ ಪಾಠವನ್ನು ಕೇಳುತ್ತೀರಿ ಎಂಬುದೇ ನನ್ನ
great expectations ಎಂದು ಛಿ ಮಾರಿ ಹಾಕಿ ಕಳುಹಿಸಿದ್ದರು .
‘ ತಿಂದ ತಕ್ಷಣವೇ ನಿದ್ದೆ ‘ ಎಂದಾಗ ನನ್ನ ಸ್ನಾತಕೋತರ ಪದವಿಯ ಗೆಳೆಯನೊಬ್ಬನದು ನೆನಪಾಯಿತು ನೋಡಿ . ನಾವು
ತರಬೇತಿಯಲ್ಲಿ ಇದ್ದಾಗ ಮಧ್ಯಾಹ್ನದಲ್ಲಿ ಊಟಕ್ಕೆಂದು ಅಬ್ಬಬ್ಬಾ ಎಂದರೆ ಅರ್ಧ ಘಂಟೆ ಸಮಯವಿರುತ್ತಿತ್ತು , ಸುಮಾರು ಐದು
ನಿಮಿಷಿನಲ್ಲಿ ಗಬಗಬನೆ ತಿಂದು , ಮಿಕ್ಕಿದ ಇಪ್ಪತ್ತು ನಿಮಿಷ ಅವನು ಎಲ್ಲೋ ಮಾಯವಾಗಿ ಬಿಡುತ್ತಿದ್ದ . ಕುತೂಹಲಕ್ಕೆಂದು
ಅವನನ್ನು ಹಿಂಬಾಲಿಸಿದಾಗ ಗೊತ್ತಾಗಿತ್ತು – ಅವನು ಪಕ್ಕದ ಕೋಣೆಯೊಂದರಲ್ಲಿ ಕುಳಿತು ಸಣ್ಣ ನಿದ್ದೆ ಮಾಡಿ ಬರುತ್ತಿದ್ದ .
ಇವರೇನೂ ಅಪರೂಪವಲ್ಲ ಬಿಡಿ , ಎಲ್ಲೆಲ್ಲೋ ಕಾಣಿಸುವವರೆ . ಇದನ್ನೇ ಇಂಗ್ಲೀಷಿನಲ್ಲಿ ಸ್ಟೈಲಿಶ್ ಆಗಿ ‘ ನ್ಯಾಪ್ ‘ ಅಂತ ಕರೆಯುವದುಂಟು ತಾನೆ ? ಪಾಪ ! ಹೊಟ್ಟೆಯ ತಪ್ಪೋ ಅಥವಾ ನಿದ್ಧೆಯ ತಪ್ಪೋ ಒಂದೂ ಗೊತ್ತಿಲ್ಲ .

ಇನ್ನು , ನಿಂತು ನಿದ್ದೆ ಮಾಡುವವರನ್ನು ನೀವು ಕಂಡಿರದೆ ಇರಬಹುದು . ಇಂಥವರು ಭರ್ಜರಿಯಾಗಿ ತುಂಬಿದ ಬಸ್ಸುಗಳಲ್ಲಿ
ಸಹಜವಾಗಿ ಸಿಗುವದುಂಟು . ನಮ್ಮೂರಿನಿಂದ ಪಟ್ಟಣಕ್ಕೆ ಸಂತೆಯ ದಿನದಂದು ಹೋಗುವ ಬಸ್ಸು ಯಾವಾಗಲೂ ಕಿಕ್ಕಿರಿದು ತುಂಬಿರುತ್ತಿತ್ತು . ನಮ್ಮ ಕಟುಕರ ಕಮಾಲಸಾಬನು ಖಾಯಮ್ ಪ್ರಯಾಣಿಕನಾಗಿದ್ದರೂ , ಧಡೂತಿ ಶರೀರವಿರುವದರಿಂದ ಬೇಗನೆ ಬಸ್ಸಿನಲ್ಲಿ ನುಗ್ಗಲಾರದೆ ಯಾವಾಗಲೂ ಕುಳಿತುಕೊಳ್ಳಲು ಸೀಟು ಸಿಗಲಾರದೆ ಒದ್ದಾಡುತ್ತಿದ್ದನು . ಪಾಪ !! ರಾತ್ರಿಯಲ್ಲ ಏನು
ಮಾಡಿರುತ್ತಿದ್ದನೋ ಕಾಣೆ , ಆದರೆ ಬಸ್ಸಿನಲ್ಲಿ ಏರಿದ ಮೇಲೆ ಮಾತ್ರ ನಿಂತುಕೊಂಡೆ ನಿದ್ದೆ ಹೊಡೆಯಲು ಪ್ರಾರಂಭಿಸುತ್ತಿದ್ದನು.
ತೂಗಾಡಿಕೆಯಲ್ಲಿ ಅವನ ಶರೀರದ ಮುಕ್ಕಾಲು ಭಾರ ಸೀಟಿನಲ್ಲಿ ಕುಳಿತವರ ಮೇಲೆ ಬೀಳುತ್ತಿತ್ತು . ಇವನ ಕಾಟವನ್ನು
ತಾಳಲಾರದೆ , ಬೈಯ್ಯಲೂ ಮನಸಿರಲಾರದೆ , ಕುಳಿತವರೆ ಎದ್ದು ಇವನಿಗೆ ತಮ್ಮ ಸೀಟು ಕೊಟ್ಟು ಕೃತಾರ್ಥರಾಗುತ್ತಿದ್ದರು .
ಅಂತು ಇಂತು ಕೊನೆಗೂ ಸೀಟು ಗಿಟ್ಟಿಸುತ್ತಿದ್ದ ಎನ್ನಿ .

ಇವರದೆಲ್ಲಾ ಒಂದು ಪಂಗಡವಾದರೆ ಇನ್ನೊಂದನ್ನು ವಿಭಿನ್ನ ಪಂಗಡವೆಂದೇ ಪರಿಗಣಿಸಬಹುದು , ಅದುವೇ ನಡೆದಾಡಿಕೊಂಡು
ನಿದ್ದೆ ಮಾಡುವವರ ಅಥವಾ ನಿದ್ದೆಯಲ್ಲಿ ನಡೆದಾಡುವವರ ಪಂಗಡ . ಈ ಪಂಗಡದ ಸದಸ್ಯರನ್ನು ಸ್ವತಃ ನೋಡಿರುವವರಕ್ಕಿಂತಲೂ ಅವರ ಬಗ್ಗೆ ಓದಿದವರೆ ಹೆಚ್ಚು ಇರಬಹುದು ಎಂಬುವದು ನನ್ನ ಅನಿಸಿಕೆ .
ನಾನು ಕೆಎಂಸಿ ಯಲ್ಲಿ ಕಲಿಯುತ್ತಿದ್ದಾಗ , ನನ್ನ ಖಾಸಾ ದೋಸ್ತ ‘ಮಂಜು’ ಹುಬ್ಬಳ್ಳಿಯ ಬಿ ವ್ಹಿ ಬಿ ಕಾಲೇಜಿನಲ್ಲಿ ಇಂಜಿನಿಯರಿಂಗ್
ಓದುತ್ತಿದ್ದ . ಅವನು ನಿದ್ದೆಯಲ್ಲಿ ಅಡ್ಡಾಡುತ್ತಿದ್ದಾನೆ ಎಂದು ಹೆದರಿಕೊಂಡು ಅವನ ರೂಮ್ಮೇಟ್ ಕೊಠಡಿಯನ್ನು ಬದಲಿಸಿದ್ದು ತಿಳಿದು ನನಗೆ ಬೇಜಾರವು ಹಾಗೆಯೇ ಕುತೂಹಲವೂ ಆಗಿತ್ತು . ಅದೊಂದು ದಿನ ನೋಡಿಯೇ ಬಿಡೋಣವೆಂದು ನಿರ್ಧರಿಸಿ ,
ಧೈರ್ಯತುಂಬಿಕೊಂಡು ಅವನ ಕೊಠಡಿಯಲ್ಲಿ ಮಲಗಲು ಹೋಗಿದ್ದೆ . ವಿಷಯ ನನ್ನ ಬೇರೆ ದೋಸ್ತಗಳಿಗೆ ಗೊತ್ತಾಗಿ ” ಲೇ ಸುಮ್ಮ್ನ
ವಾಪಸ್ ಹೋಗಿ ಬಿಡು , ಇಲ್ಲಂದ್ರ ನಡು ರಾತ್ರ್ಯಾಗ ಓಡಿ ಹೋಗತಿ ನೋಡ್ ಮಗನ ” ಅಂತ ಬೆದರಿಕೆಯ ಮಾತುಗಳನ್ನು
ಆಡಿದ್ದರು . ಆದರೂ ಅವರ ಮಾತುಗಳಿಗೆ ಬೆಲೆ ಕೊಡದೆ ಅವನ ಕೊಠಡಿಯಲ್ಲಿ ಮಲಗುವ ಸಾಹಸವನ್ನು ಮಾಡಿ ಬಿಟ್ಟಿದ್ದೆ . ಗಾಢ ನಿದ್ದೆಯಲ್ಲಿದ್ದ ಮಂಜು , ನಡು ರಾತ್ರಿಯಲ್ಲಿ ಕೋಣೆಯ ಬಾಗಿಲು ತೆಗೆದು ಹೊರಗೆ ಹೊರಟೇ ಬಿಟ್ಟಿದ್ದ . ಭಯವಾದರೂ ಕುತೂಹಲದಿಂದ ಅವನನ್ನೆ ಹಿಂಬಾಲಿಸಿದ್ದೆ . ನಿದ್ದೆಯಲ್ಲಿ ನಡೆಯುತ್ತ ನಡೆಯುತ್ತಾ ಅವನು ಎದುರುಗಡೆಯಿದ್ದ ಸ್ಮಶಾನದ ಜಾಗವನ್ನು ಪ್ರವೇಶಿಸಿದಾಗ ನನಗೆ ಧೈರ್ಯಸಾಲದೆ ವಾಪಸು ಓಡಿ ಬಂದಿದ್ದೆ . ಮನುಷ್ಯನ ಮೆದಳು ನಿದ್ದೆಯಲ್ಲಿಯೂ
ಇಷ್ಟೊಂದು ಅಚ್ಚು ಕಟ್ಟಾಗಿ ಹೇಗೆ ಕೆಲಸ ಮಾಡುತ್ತದೆ ಎಂಬುದು ನನಗೆ ಇನ್ನೂ ಒಗಟಾಗಿರುವ ವಿಷಯ . ಮಂಜುನಾಥನ
ಆಶೀರ್ವಾದದಿಂದ ಮಂಜು ಈಗ ನಿದ್ದೆಯಲ್ಲಿ ನಡೆಯುವದನ್ನು ಬಿಟ್ಟಿದ್ದಾನೆಂದು ಅವನ ಶ್ರೀಮತಿಯವರಿಂದ ತಿಳಿದು
ಸಂತೋಸವಾಯಿತು ಎನ್ನಿ .

ಈ ನಿದ್ದೆಯ ಪುರಾಣ ಇಷ್ಟಕ್ಕೆ ಮುಗಿಯುವದಿಲ್ಲ ಬಿಡಿ . ‘ ಅತಿ ‘ ಎಂಬುವದಕ್ಕೆ ‘ ಮಿತಿ ‘ ಅಂತ ವಿರುದ್ಧ ಪದವಿರುವದು ನಿಜ .
ಹಾಗೆಯೆ ಅತಿಯಾಗಿ ನಿದ್ದೆಮಾಡುವವರು ಒಂದೆಡೆ ಇದ್ದರೆ , ಇನ್ನು ನಿದ್ದೆ ಬರದೆ ಒದ್ದಾಡುವವರು ಇನ್ನೊಂದೆಡೆ ಇರಲೇಬೇಕಲ್ಲವೆ ? ನಿದ್ದೆ ಬಾರದೆ ಪರಿತಪಿಸುವ ಬಹು ಜನರು ಮನಬಂದಂತೆ ಪರಿಶೋಧನೆ ನಡೆಸಿ , ತಮಗೆ ತಕ್ಕ ಹವ್ಯಾಸಗಳನ್ನು
ಬೆಳೆಸಿಕೊಳ್ಳುವದು ಸಹಜ . ಹವ್ಯಾಸ ಒಳ್ಳೆಯದೊ ಕೆಟ್ಟದ್ದೊ ಬೇರೆ ವಿಷಯ ಬಿಡಿ .
ಅಂತೂ ‘ ಮನಸಿದ್ದರೆ ಮಾರ್ಗ ‘ಎಂದು ಅಂಬುವದರಲ್ಲಿ ಅವರಿಗೆ ನಂಬಿಕೆ ಇರುವದು ಶ್ಲಾಘನೀಯ . ನಿದ್ದೆ ಬರಲೆಂದು
ಸೋಮಾರಿಗಳು ಕೂಡ ತಾಸು ಗಂಟಲೇ ‘ ವಾಕಿಂಗ್ ‘ ಮಾಡುವದಕ್ಕೆ ಮತ್ತು ಪುಸ್ತಕಗಳ ಮುಖವನ್ನೇ ನೋಡದವರು
ಮೂಟೆಗಂಟಲೇ ಪುಸ್ತಕಗಳನ್ನು ಖರೀದಿಸಿ ಓದಲು ಪ್ರಾರಂಭಿಸುವದಕ್ಕೆ ಈ ನಿದ್ದೆರಾಯನೇ ಕಾರಣ ಎಂಬುದೊಂದು ನೆಮ್ಮದಿಯ
ಸಂಗತಿ . ಅದಕ್ಕಾದರೂ ಅವನಿಗೊಂದು ಧನ್ಯವಾದವನ್ನು ಹೇಳಲೇ ಬೇಕಲ್ಲವೆ ?
ಒಟ್ಟಿನಲ್ಲಿ ನನ್ನ ಮಾಧ್ಯಮಿಕ ಶಾಲೆಯ ಕಿಡಿಗೇಡಿ ಗೆಳೆಯರು ಹೇಳಿದಂತೆ , ಒಂದಿಲ್ಲ ಒಂದು ರೀತಿಯಲ್ಲಿ ಬಹು ಜನರಿಗೆ ‘ನಿದ್ದೆಯೇ ಜೀವನದ ಹೆಗ್ಗುರಿ ‘ ಯಾಗಿರುವದು ಮಾತ್ರ ನಿಜ ಸಂಗತಿ . ನೀವೇನು ಅನ್ನುತ್ತೀರಿ ?
ಹರಟೆಯ ನೆಪದಲ್ಲಿ ನನ್ನಿಂದ ಇಷ್ಟೊಂದು ಕೊರೆಯಿಸಿಕೊಂಡ ಮೇಲೆ , ತಾಳ್ಮೆಯಿಂದ ಓದಿದವರಿಗೆಲ್ಲ ಕಣ್ಣು ತುಂಬಾ ನಿದ್ದೆ ಬರುತ್ತದೆ ಎಂದು ಬಲವಾಗಿ ನಂಬಿರುವೆ.

—– ಶಿವಶಂಕರ ಮೇಟಿ

ಬಾಸ್ವರ್ತ್ ಯುದ್ಧರಂಗ ಎನ್ನುವ ಇಂಗ್ಲೆಂಡಿನ ಪ್ರೇಕ್ಷಣೀಯ ಸ್ಥಳ -ಶ್ರೀವತ್ಸ ದೇಸಾಯಿ

ಒಂದು ರೀತಿಯಿಂದ ಇದು ಇಂಗ್ಲೆಂಡಿನ ದೊರೆ ಮೂರನೆಯ ರಿಚರ್ಡ್ ನ ಇತಿಹಾಸದ ಬಗ್ಗೆ ನಾನು ಬರೆದ ಲೇಖನದ (https://wp.me/p4jn5J-3Sw) ಹಿಂದೆ ಸರಿದ ಭಾಗ! ಅದರಲ್ಲಿ ಆತನ ಮರಣದ ನಂತರದ ಘಟನೆಗಳ ವಿಶ್ಲೇಷಣೆಯಿದ್ದರೆ ಇದರಲ್ಲಿ ಆತ ಸಾವನ್ನಪ್ಪಿದ ಜಾಗದ ಸ್ಥಳಪುರಾಣ ಇದೆ. ಅಲ್ಲಿ ನೋಡುವದೇನು ಇದೆ? ಇದೇ ಪ್ರಶ್ನೆಯನ್ನು ಸ್ಟೇನ್ಸ್ಟಪಕ್ಕದ ರನ್ನಿಮೀಡ್ ಬಗ್ಗೆಯೂ ಕೇಳಬಹುದು. ಅಲ್ಲಿ ಮ್ಯಾಗ್ನಾ ಕಾರ್ಟಾದ ಮೇಲೆ ಸಹಿ ಆಗಿತ್ತು. ಅಲ್ಲಿ ಇತಿಹಾಸವಿದೆ. ಇಂಥ ಐತಿಹಾಸಿಕ ಸ್ಥಳಗಳಲ್ಲೆಲ್ಲ ಅದರ ಹಿಂದಿನ ಐತಿಹಾಸಿಕ ಸಂಗತಿಗಳೇ ರೋಚಕ. ಇತಿಹಾಸ ಎದ್ದು ಬರುತ್ತದೆ; ವ್ಯಕ್ತಿಗಳು, ರಾಜರು ಜೀವ ತಳೆದು ಮಾತಾಡುತ್ತಾರೆ! ಒಂದು ವಿಷಯ: ನಾವು ಲ್ಯಾಂಕಾಸ್ಟರಿನ ಕೆಂಪು ಮತ್ತು ಯಾರ್ಕ್ ಶೈರಿನ ಬಿಳಿ ಗುಲಾಬಿ ಲಾಂಛನಗಳ ಬಗ್ಗೆ ಓದುತ್ತೇವೆ. ಆದರೆ ಅವುಗಳು ಆಗ ಲಾಂಛನವಾಗಿರಲಿಲ್ಲ. ಸೈನಿಕರು ಹೊತ್ತ ಬಿಳಿ ಬ್ಯಾಜಿನ ದಾಖಲೆ ಮಾತ್ರ ಇದೆ. ಶೇಕ್ಸ್ಪಿಯರನ ನಾಟಕದಲ್ಲಿ ಮತ್ತು ನಂತರದ ಹತ್ತೊಂಬತ್ತನೆಯ ಶತಮಾನದ ಬರವಣಿಗೆಗಳಲ್ಲಿ ಈ ಸಂಜ್ಞೆಗಳಿಗೆ ಪ್ರಚಾರ ಬಂದಿತು. -(ತತ್ಕಾಲ ಸಂ!)
king-richard-iii-
ಮೂರನೆಯ ರಿಚರ್ಡ್                             ಮೊದಲು ಸ್ವಲ್ಪ ಇತಿಹಾಸ

ಮೇಲಿನ ಮಾತುಗಳ ಅರ್ಥವಾಗಲು ಕೆಲವು ಐತಿಹಾಸಿಕ ವಿಷಯಗಳನ್ನು ಅರಿತುಕೊಳ್ಳಬೇಕಾಗುತ್ತದೆ. ಬಹಳಷ್ಟು ಜನರಿಗೆ  ಇಂಗ್ಲೆಂಡಿನ ಎರಡು ಎರಡು ಪ್ರಮುಖ ರಾಜವಂಶ ಪಂಗಡಗಳಾದ ಲ್ಯಾಂಕಾಸ್ಟರ್ ಮನೆತನ (ಲಾಂಛನ ಕೆಂಪು ಗುಲಾಬಿ) ಮತ್ತು ಯಾರ್ಕ್ ಮನೆತನಗಳ (ಬಿಳಿ ಗುಲಾಬಿ) ಮಧ್ಯೆ 30 ವರ್ಷಗಳ ಕಾಲ ನಡೆದ 15 ಯುದ್ಧಗಳ ಬಗ್ಗೆ (”ದ ಬ್ಯಾಟಲ್ ಆಫ್ ದಿ ರೋಸಸ್”) ಗೊತ್ತಿದ್ದರೂ ಅದು ಮುಕ್ತಾಯವಾದ ಬಾಸ್ವರ್ತ್ಎನ್ನುವ ಊರಿನ ಹತ್ತಿರದ ಈ ತಗ್ಗು, ದಿನ್ನೆ ಮತ್ತು ಚೌಗು ಪ್ರದೇಶದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿರಲಿಕ್ಕಿಲ್ಲ. ಧರ್ಮಕ್ಷೇತ್ರವಾದ ಕುರುಕ್ಷೇತ್ರದಲ್ಲಿ ಕಾದ ದಾಯಾದಿಗಳಾದ ಕೌರವ ಪಾಂಡವರಂತೆಯೇ ಇಂಗ್ಲೆಂಡಿನ ಕಿರೀಟಕ್ಕಾಗಿ ಹೋರಾಡಿದ ಈ ಎರಡೂ ಮನೆತನಗಳೂ 14 ನೆಯ ಶತಮಾನದಲ್ಲಿ ಆಳಿದ ಮೂರನೆಯ ಎಡ್ವರ್ಡ್ ಪ್ಲಾಂಟಾಂಜನೆಟ್ ದೊರೆಯ ಸಂತತಿಗಳೇ! ಅ ಕರಾಳ ದಿನ ಬೆಳಗಿನ ಸಮಯ (22ನೆಯ ಆಗಸ್ಟ್, 1485) ಬಾಸ್ವರ್ತ್ ಯುದ್ಧದಲ್ಲಿ ಮೂರನೆಯ ರಿಚರ್ಡ್ ಇಂಗ್ಲೆಂಡಿನ ಪಟ್ಟಕ್ಕಾಗಿ ಎದುರಾಳಿಯಾದ (ಮುಂದೆಏಳನೆಯ ಹೆನ್ರಿ ಎಂದು ಕರೆಯಲ್ಪಡಲಿರುವ)  ಹೆನ್ರಿ ಟ್ಯೂಡರ್ ನ ದಂಡಿನ ಮೇಲೆ ರಾಜ ಸ್ವತಃ ಏರಿ ಹೋದಾಗ ತಲೆಗೆ ವೈರಿಯ ಹ್ಯಾಲ್ಬರ್ಡ್ (halberd) ಎನ್ನುವ ಭೀಕರ ಶಸ್ತ್ರದ ಪ್ರಹಾರದಿಂದ ಮರಣಹೊಂದಿದ. ಆತನ ಕುದುರೆಯ ಕಾಲುಗಳು ಕೆಸರಿನಲ್ಲಿ ಸಿಕ್ಕಿಕೊಂಡಿದ್ದರಿಂದ ಕೆಳಗಿಳಿಯಬೇಕಾಗಿ ಅಲ್ಲಿಂದಲೆ ಧೈರ್ಯದಿಂದ ಮುನ್ನುಗ್ಗಿದ್ದ ರಿಚರ್ಡ್ ಯುದ್ಧರಂಗದಲ್ಲಿ ಮೃತನಾದ ಇಂಗ್ಲೆಂಡಿನ ಕೊನೆಯ ಅರಸನೂ ಆಗಿದ್ದಾನೆ. ಆತ ಆಳಿದ್ದು ಬರೀ ಹದಿನಾಲ್ಕು ವರ್ಷ ಮಾತ್ರ.

ಬಾಸ್ವರ್ತ್ ಯುದ್ಧರಂಗ

ನೆರಳು ಗಡಿಯಾರ (Sun dial with the crown of Richard III)

ಧರ್ಮಕ್ಷೇತ್ರೇ ಕುರುಕ್ಷೇತ್ರೇ!

ಆಗ ಪ್ರಾಟೆಸ್ಟೆಂಟ್ ಮತ ಹುಟ್ಟಿರಲಿಲ್ಲ. ರಿಚರ್ಡನ ಪೂರ್ವಜರಿಗೆ ಫ್ರಾನ್ಸ್ ದೇಶದ ಸಂಬಂಧವಿತ್ತು ಅಂತ ಆತನೂ ಕ್ಯಾಥಲಿಕ್ ಆಗಿದ್ದ. ಆತ ಮೃತನಾದ ಮೇಲೆ ಆತನ ದೇಹವನ್ನು ಹತ್ತಿರದ ಲೆಸ್ಟರಿನ ಫ್ರಾನ್ಸಿಸ್ಕನ್ ಫ್ರಯರಿ ಚರ್ಚಿನಲ್ಲಿ ಗಡಿಬಿಡಿಯಿಂದ ಮಣ್ಣು ಮಾಡಲಾಗಿತ್ತು. ಅದರ ಗುರುತುಗಳೆಲ್ಲ ಮಾಯವಾಗಿದ್ದವು. ಮುಂದೆ ಆ ಸ್ಥೂಲಕಾಯದ, ಷಟ್ಪತ್ನಿವ್ರತ (!) ಎಂಟನೆಯ ಹೆನ್ರಿ ಪೋಪನನ್ನು ಮಾನ್ಯ ಮಾಡದೆ ಪ್ರಾಟೆಸ್ಟೆಂಟ್ ಆದ. ಆತ ಫ್ರಯರಿಗಳನ್ನು (Friary) ರದ್ದುಗೊಳಿಸಿದ. ಸೋರ್ ನದಿಯಲ್ಲಿ ರಿಚರ್ಡನ ಅಸ್ಥಿಯನ್ನು ಚೆಲ್ಲಲಾಯಿತೆಂದೆಲ್ಲ ವದಂತಿ ಹಬ್ಬಿತ್ತು. ಅದಕ್ಕೆ ಅದನ್ನು ಪತ್ತೆ ಹಚ್ಚಲು ಐದು ಶತಮಾನಗಳೇ ಬೇಕಾಯಿತು. ಆತನ ನಿಷ್ಟ ಅಭಿಮಾನಿಗಳ ಪ್ರಯತ್ನದಿಂದ ಸಂಶೋಧನೆ ಪ್ರಾರಂಭವಾಗಿ ಆ ಚರ್ಚಿನ ಗುರುತು ಹಿಡಿದು ಕಾರ್ ರ್ಪಾರ್ಕಿನಡಿ ಉತ್ಖನನ ಮಾಡಿ ರಿಚರ್ಡನನ್ನು ವಿಜೃಂಭ್ಹಣೆಯಿಂದ ಲೆಸ್ಟರ್ ಕೆಥಿಡ್ರಲ್ನಲ್ಲಿ ಸಮಾಧಿ ಮಾಡಿದ್ದು ಕ್ಯಾಥಲಿಕ್ ಮತದ ಕ್ರಿಶ್ಚಿಯನ್ನರಿಗೆ ಅಸಮಾಧಾನವಾಗಿತ್ತು! 

ಕೊನೆಯುಸಿರೆಳೆದವರೆಷ್ಟು ಜನ?

ಹಾಗೆ ನೋಡಿದರೆ ಒಂದು ಸಾವಿರ ಜನ ಮೃತರಾದರೂ, ಎರಡೂ ಕಡೆ ಸೇರಿ ಪಾಲುಗೊಂಡ 22,000 ಯೋಧರ ಸಂಖ್ಯೆ ಕುರುಕ್ಷೇತ್ರದ ಹದಿನೆಂಟು ಅಕ್ಷೌಹಿಣಿ ಸೈನ್ಯಕ್ಕೆ ಹೋಲಿಸಲಾಗದು. ಅದರಲ್ಲಿ ಎರಡುಸಾವಿರ ಯೋಧರು ಫ್ರಾನ್ಸಿನಿಂದ ಬಂದ ಕೂಲಿ ಸೈನಿಕರು (mercenaries). ಈ ದೇಶದ ಅತ್ಯಂತ ಭೀಕರವಾದ ಯಾದವೀ ಕಾಳಗವೆಂದು ಪ್ರಸಿದ್ಧವಾದ ಐವತ್ತು ಸಾವಿರ ಜನ ಭಾಗವಹಿಸಿದ್ದ ಟೌಟನ್ ಯುದ್ಧಕ್ಕೆ ಸಮ ಇದು ಆಗಿರಲಿಲ್ಲ. ಆದರೂ ಇದು ಈ ದೇಶದ ಇತಿಹಾಸಕ್ಕೆ ಅತ್ಯಂತ ಮಹತ್ವದ ತಿರುವು ಕೊಟ್ಟಿತ್ತು. ರಿಚರ್ಡನ ಪತನದಿಂದ ಇಂಗ್ಲೆಂಡಿನ ದೊರೆಯಾದ ಏಳನೆಯ ಹೆನ್ರಿ ಯಾರ್ಕ್ ಮಹಿಳೆಯನ್ನು ಮದುವೆಯಾಗಿ ಎರಡೂ ಪಂಗಡಗಳನ್ನು ಒಂದುಗೂಡಿಸಿದ. ಆತನ ಲಾಂಛನವೇ ಮುಂದೆ ಬಿಳಿ-ಕೆಂಪು ಎರಡೂ ಬಣ್ಣದ ಹೂಗಳೊಂದಿಗೆ ಟ್ಯೂಡರ್ ರೋಸ್ ಆಯಿತು.

ರಿಚರ್ಡನ ಕೊನೆಯ ಮಾತುಗಳು

ಬಾಸ್ವರ್ತ್ ರಣರಂಗದ ಸುತ್ತಲೂ ನಡೆದಾಡಲು ಅನುಕೂಲವಾಗುವ ಪಥ ಅದೆ. ಅಲ್ಲಲ್ಲಿ ಉತ್ತಮ ಮಾಹಿತಿ ಫಲಕಗಳನ್ನು ನಿರ್ಮಿಸಿದ್ದರಿಂದ 500 ವರ್ಷಗಳ ಹಿಂದಿನ ಇತಿಹಾಸ ಜೀವ ತಳೆದು ಸಮರ ಇದುರಿಗೇ ನಡೆಯುತ್ತಿದೆಯೇನೋ ಅಂತ ರೋಮಾಂಚನವಾಗುತ್ತದೆ. ಕುದುರೆಗಳ ಖುರಪುಟ, ಕತ್ತಿ ಗುರಾಣಿಗಳ ಘರ್ಷಣೆಯ ಖಟ್ – ಖಡಲ್, ಮರಣವನ್ನಪ್ಪುತ್ತಿರುವ, ಗಾಯಗೊಂಡ ಸೈನಿಕರ ಆರ್ತ ನಾದ, ಕಿವಿಯನ್ನು ಗಡಚಿಕ್ಕುತ್ತವೆ. ಇಂಥ ಕಾಳಗಗಳಲ್ಲಿ ಕುದುರೆ ಸವಾರರದೇ ಮೇಲುಗೈಯೆಂದ ಮೇಲೆ ಕುದುರೆಯನ್ನು ಕಳೆದುಕೊಂಡು ಕುದುರೆಯಿಂದ ಕೆಳಕ್ಕುರುಳಿದ ರಿಚರ್ಡ್ ದೊರೆ ’ಒಂದು ಕುದುರೆಗಾಗಿ ಏನನ್ನು (ನನ್ನ ರಾಜ್ಯವನ್ನೂ) ಕೊಡಲಾರೆ” ಅಂದನಂತೆ. ಆತನ ಕಿರೀಟ ಹಾರಿತ್ತು ಎದುರಾಳಿಗಳ ಭರ್ಚಿ-ಕೊಡಲಿ ಕೂಡಿದ ಹ್ಯಾಲ್ಬರ್ಡ್ ಶಸ್ತ್ರದಿಂದ ಭೀಕರ ಹತ್ಯೆಯಾಯಿತು..ಶೇಕ್ಸ್ಪಿಯರನ ನಾಟಕದ ಪ್ರಸಿದ್ಧ ಸಾಲುಗಳ ಪ್ರಕಾರ “A horse, a horse, My kingdom for a horse” ಅಂತ ಕನವರಿಸುತ್ತ ಮಡಿದನಂತೆ

ರಾಜನ ಕೊನೆಯ ನೀರಿನ ಗುಟುಕು?

ಬಾಸ್ವರ್ತ್ ರಣಭೂಮಿಯ ಸುತ್ತಿನ ದಾರಿಯ ಹದಿನೇಳನೆಯ ಮತ್ತು ಕೊನೆಯ ವೀಕ್ಷಣಾ ಸ್ಥಾನದಲ್ಲಿ ಹತ್ತೊಂಬತ್ತನೆ ಶತಮಾನದಲ್ಲಿ ಊರ್ಜಿತವಾದ ಒಂದು ಕಲ್ಲುಗುಡ್ಡೆ (Cairn) ಇದೆ. ಅದು ಅಲ್ಲಿ ಹರಿವ ನೀರಿನ ಸೆಲೆಯ ಮೇಲೆ ಕಟ್ಟಲಾಗಿದೆ ಅನ್ನುತ್ತದೆ ಒಂದು ಫಲಕ. ಅದರ ಪಕ್ಕದಲ್ಲೇ ರಿಚರ್ಡನ ಸೈನ್ಯಯುದ್ಧ ಪೂರ್ವ ’ಡೇರೆ’ ಹಾಕಿತ್ತು. ಅಲ್ಲಿಯೇ ಆತ ಕೊನೆಯ ಬಾರಿ ನೀರು ಕುಡಿದನೆಂದು ಪ್ರತೀತಿ. ಆ ಸ್ಥಳವನ್ನು ಇಂದಿಗೂ ನೋಡಿ ನಿಮ್ಮ ಇತಿಹಾಸ ಪಿಪಾಸೆಯನ್ನು ತಣಿಸಿಕೊಳ್ಳಬಹುದು.

ಕೊನೆಗೂ ವಿಜ್ಞಾನದ ತೀರ್ಪು

ಯುದ್ಧದ ನಾಮೋ ನಿಶಾನೆ ಎಲ್ಲ ಅಳಿಸಿ ಹೋಗಿರುವಾಗ ಈ ಜಾಗದಲ್ಲೇ ಆ ರಣರಂಗವಿತ್ತು ಅಂತ ಹೇಗೆ ಸಾಬೀತು ಮಾಡಲಾಯಿತು? ಅದಕ್ಕೆ ಸಹಾಯ ಬಂದುದು ಆಧುನಿಕ ಕಾರ್ಬನ್ ಡೇಟಿಂಗ್ ವಿಜ್ಞಾನ. ಈ ದೇಶದಲ್ಲಿ ಅತ್ಯಂತ ಹಳೆಯ ಚರ್ಚುಗಳಲ್ಲೂ ಉಳಿದಿರುವ ದಾಖಲೆಗಳು ಇತಿಹಾಸವನ್ನು ಜೋಡಿಸಲು ಬಹಳ ಸಹಾಯ ಮಾಡುತ್ತವೆ. ಹುಟ್ಟು, ಬಾಪ್ಟಿಸಮ್ (ನಾಮಕರಣ), ಮದುವೆ, ಶವಸಂಸ್ಕಾರದ ದಾಖಲೆಗಳನ್ನು ಮುತವರ್ಜಿಯಿಂದ ಕಾದಿಡಲಾಗುತ್ತದೆ. ಪಕ್ಕದ ಡಾಡ್ಲಿಂಗ್ಟನ್ ಚರ್ಚಿನ ಶವಸಂಸ್ಕಾರ ದಾಖಲೆಗಳಿಂದ ಇತಿಹಾಸದ ತುಣುಕುಗಳನ್ನು ಜೋಡಿಸಿದ ಮೇಲೆಯೂ ಉಳಿದಿರಬಹುದಾದ ಸಂಶಯಗಳನ್ನು ನಿವಾರಿಸಲು ಆಧುನಿಕ ವಿಜ್ಞಾನ ಸಹಾಯಕ್ಕೆ ಬಂದಿದೆ. ಶತಮಾನಗಳ ಹಿಂದೆ ಲೆಸ್ಟರಿನ ಮಧ್ಯೆ ನೆಲಸಮವಾಗಿ ಹೂತುಹೋದ ಫ್ರಯರಿ ಚರ್ಚಿನಲ್ಲಿ ಸಿಕ್ಕ ಎಲುಬುಗಳು ರಿಚರ್ಡ್ ದೊರೆಯದೇ ಅಂತ ಹಲ್ಲಿನ ಡಿ ಎನ್ ಏ ಸಾಬೀತು ಮಾಡಿದಂತೆ ಬಾಸ್ವರ್ತ್ ಹತ್ತಿರದ ಆಳದ ಮಣ್ಣಿನ ಪೀಟ್ (peat) ಸ್ಯಾಂಪಲ್ಲುಗಳನ್ನು ಕಾರ್ಬನ್ ಡೇಟಿಂಗ್ ಮಾಡಿ ಪರೀಕ್ಷಿಸಿದ ಅಮೇರಿಕೆಯ ಲ್ಯಾಬೋರಟರಿ ಐದು ನೂರು ವರ್ಷಗಳ ಹಿಂದೆ ಇಲ್ಲಿರುವುದೇ ಜವುಳು ಪ್ರದೇಶ (marshland) ಅಂತ ಖಚಿತಪಡಿಸಿತು. ಅದರಿಂದ ರಣರಂಗದ ಸರಿಯಾದ ಜಾಗ ಇದು ಅಂತ ನಿಶ್ಚಿತವಾಯಿತು.ಇವೆಲ್ಲ ಮಾಹಿತಿ ಪಕ್ಕದಲ್ಲಿರುವ ವಿಸಿಟರ್ ಸೆಂಟರ್ ನಲ್ಲಿರುವ ಉತ್ತಮ ಮ್ಯೂಸಿಯಮ್ ದಲ್ಲಿ ದೊರಕುತ್ತವೆ.

ಕೊನೆಯ ಮಾತು

ಇತಿಹಾಸದಿಂದ ಏನು ಉಪಯೋಗ ಎಂದು ಅನೇಕರ ಅಭಿಪ್ರಾಯವಾದರೂ ಜಾರ್ಜ್ ಸಾಂಟಾಯನ ಹೇಳಿದಂತೆ ಇತಿಹಾಸವನ್ನರಿಯದವರು ಮತ್ತೆ ಮತ್ತೆ ಅವೇ ತಪ್ಪುಗಳನ್ನು ಮಾಡುವ ಶಾಪಗ್ರಸ್ತರಾಗುತ್ತಾರೆ! ಇತಿಹಾಸವನ್ನು ತುಳಿದರೆ ಅದು ನಿನ್ನನ್ನು ನೆಲಸಮಮಾಡುತ್ತದೆ! ಆದರೆ ಮಾನವ ಇತಿಹಾಸದ ತುಂಬೆಲ್ಲ ಈರ್ಷೆ, ದ್ವೇಷಗಳಿಂದ ಯುದ್ಧಗಳಾಗುತ್ತಿರುವಾಗ ಅತ್ಯಂತ ಪುರಾತನ ಉಪನಿಷತ್ತಿನ ವಾಕ್ಯ ’ಮಾ ವಿದ್ವಿಷಾವಹೈ’ (ವೈಮನಸ್ಸು, ದ್ವೇಷ ಬೇಡ) ಯನ್ನು ಯಾರೂ ಕೇಳಿಸಿಕೊಂಡಿಲ್ಲವೇ? ಎಂದೆನಿಸುತ್ತದೆ

ಶ್ರೀವತ್ಸ ದೇಸಾಯಿ.

(ಈ ವಾರದ ಕನ್ನಡಪ್ರಭದಲ್ಲಿಯ ನನ್ನ ಲೇಖನದ ವಿಸ್ತೃತ ಆವೃತ್ತಿ)

ಫೋಟೋಗಳು: ಲೇಖಕರವು; Photo of Peat: CC BY-SA 3.0, https://commons.wikimedia.org/w/index.php?curid=244694

Links: My article: https://wp.me/p4jn5J-3Sw

https://www.bosworthbattlefield.org.uk/