ಒಲುಮೆಯಿಂದ ಆತ್ಮಸಾಂಗತ್ಯದತ್ತ…

ಪ್ರಿಯ ಓದುಗರೆ
ಈ ವಾರದ ಅನಿವಾಸಿಯಲ್ಲಿ, ಇತ್ತೀಚಿಗೆ ಬಳಗಕ್ಕೆ ಸೇರಿದ ಹೊಸ ಬರಹಗಾರ್ತಿಯ ಬರಹವನ್ನು ಪರಿಚಯಿಸುತ್ತಿದ್ದೇನೆ.
ವೃತ್ತಿಯಲ್ಲಿ ಅರಿವಳಿಕೆ ವಿಭಾಗದಲ್ಲಿ ತಜ್ಞ ವೈದ್ಯೆಯಾಗಿರುವ ದೀಪಾ ಸಣ್ಣಕ್ಕಿಯವರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕಿನವರು. ಸದ್ಯ ಇಂಗ್ಲೆಂಡಿನ ಸ್ಟಾಕ್ಟನ್ ಆನ್ ಟೀಸ್ ಅಲ್ಲಿ ವಾಸವಾಗಿದ್ದಾರೆ. ಇತ್ತೀಚಿಗೆ ವೈದ್ಯ ಸಂಪದದಲ್ಲಿ ಅವರ ಕವನವೂ ಕೂಡಾ ಪ್ರಕಟವಾಗಿತ್ತು. ಕನ್ನಡ ಸಾಹಿತ್ಯದಲ್ಲಿ ತುಂಬಾ ಆಸಕ್ತಿ. ಮನತುಂಬಿ ಬರೆಯುವುದು ಹವ್ಯಾಸ. ದಯವಿಟ್ಟು ಓದಿ ಹರಸಿ

ಪ್ರಸಂಗ ೧
ಕಡಿದಾದ ಬೆಟ್ಟದ ಏರಿನ ಕಾಲುದಾರಿ ಸವೆಸುತ ಸಮಯ ಸಂದಿದ್ದೇ ಗೊತ್ತಾಗಲಿಲ್ಲ. ಅವರಿಬ್ಬರು ಬೆಟ್ಟದ ಪಾದದಡಿ ಸೇರಿದಾಗ ಬೆಳಗಿನ ಐದು ಕಳೆದಿರಬೇಕು. ಆಗಿನ್ನೂ ನಸುಗಪ್ಪು ಕತ್ತಲು. ಒಬ್ಬರನ್ನೊಬ್ಬರು ನೋಡದೇ ಮೂರು ವರ್ಷವೇ ಕಳೆದು ಹೋಗಿ, ಮುಖಚಹರೆಯ ನೆನಪು ಮಾಸಿಹೋದಂತಿತ್ತು‌‌. ಆದರೂ, ಫೋನಿನ ಸಂಭಾಷಣೆಯ ಚಿರಪರಿಚಿತ ಧ್ವನಿಯೊಂದಿಗೆ ಸಂಭ್ರಮದಿಂದ ಪರಸ್ಪರ ಬರಮಾಡಿಕೊಂಡಿದ್ದರು. ಪೂರ್ವಾಭಿಮುಖವಾದ ಬೆಟ್ಟವನ್ನು ಮೇಲೆರಿದಂತೆ, ಸೂರ್ಯೋದಯದ ಸೊಬಗು ಕಣ್ಣಿಗೆ ಕಾಣದಿದ್ದರೂ ಸೃಷ್ಟಿಯ ಎಲ್ಲಾ
ಸಂಕೇತಗಳೂ ಅರುಣೋದಯವನ್ನು ಸಾರುತಿದ್ದವು. ಬಾನಿನಂಚಿನಲ್ಲಿ ಬೆಳಗು ಮೂಡಲು ಕಾಯದೇ, ಹಕ್ಕಿಗಳು ಎಂದಿನಂತೆ ತಮ್ಮ ದಿನಚರಿಯಲ್ಲಿ ತೊಡಗಿದ್ದವು. ದಟ್ಟವಾಗಿ ಹಬ್ಬಿದ ಮರಗಳ ಸಂದುಗೊಂದಿನಂದ ಉದಯರವಿಯ ಕಿರಣಗಳು ತೂರಿ ಬರುತ್ತಿದ್ದವು. ಇಬ್ಬನಿಯಲಿ ತೋಯ್ದ ಇಳೆ, ಕಾಡುಹೂವುಗಳ
ಮಿಶ್ರಸುಗಂಧ, ಮರಿ ಹಕ್ಕಿಗಳ ಕೊರಳ ಇಂಪನ,ಇವೆಲ್ಲವೂ ಇಬ್ಬರ ಮನಸ್ಸನ್ನು ಆಹ್ಲಾದಕರವನ್ನಾಗಿ ಮಾಡಿದ್ದವು. ಕಳೆದ ಮೂರು ವರ್ಷದಿಂದ ಬರೀ ಫೋನಿನ ಸಂಭಾಷಣೆಯಲ್ಲಿ ತೊಡಗಿ, ಇಂದು ಮುಖಾಮುಖಿಯಾಗುವ ಅಪರೂಪದ ಸುದಿನವಾಗಿತ್ತು.‌ ಅದೇ ಕಾರಣಕ್ಕಾಗಿಯೇ, ಮಾಗಿಯ ಚಳಿಯು ನಡುಕವನ್ನುಂಟು ಮಾಡದೆ, ಮನಸನ್ನು ಪ್ರಫುಲ್ಲಿತಗೊಳಿಸುತ್ತಿತ್ತು. ಮನಮಂದಿರದಲ್ಲಿ ಸ್ಥಾಪಿಸಿದ ಮೂರ್ತಿಯು ಇಂದು ಜೀವತಳೆದು ಕಣ್ಮುಂದೆ ಅವತರಿಸಲು ಅವಳ ಮನವು ಭಾವೋನ್ಮತ್ತವಾಗಿತ್ತು.‌ಒಡಲಲ್ಲಿ ಭಾವನೆಗಳ ಮಹಾಪೂರ ಹರಿಯುತ್ತಿದ್ದರೂ ಮಾತುಗಳಿಗೆ ಬರ ಬಂದು ಮೌನವೇ ಪ್ರಧಾನವಾಗಿತ್ತು.

“ನಾನಿರುವ ಊರಲ್ಲಿ ಆಕಾಶ, ಅದೆಷ್ಟು ವಿಸ್ತಾರವಾಗಿ ಕಾಣ್ತದೆ ಗೊತ್ತಾ? ಆ ಬಾನಿನಂಚಿನಿಂದ ಈ ಬಾನಿನಂಚಿನವರೆಗಿನ ಅಗಾಧತೆಯನ್ನು ನೋಡುವುದೇ ಒಂದು ಕಣ್ಣಿಗೆ ಹಬ್ಬ ಕಣೋ!”
ಅವಳ ಮಾತಿಗೆ ಬರಿ ಹೂಂಗುಟ್ಟಿ ಅವನು ಮತ್ತೇ ದೃಷ್ಟಿಯನ್ನು ಆಗಸದೆಡೆಗೆ ನೆಟ್ಟ. ಭಾವಪ್ರವಾಹ ತುಂಬಿ ಬಂದಾಗ ಅವನು ಮೌನಕ್ಕೆ ಶರಣಾಗುವುದನ್ನು ಅವಳು ಮನಃ ಪೂರ್ತಿ ಬಲ್ಲಳು, ಒಪ್ಪಿಕೊಂಡಿರುವಳು ಕೂಡ! ಸಂಭಾಷಣೆಯಲ್ಲಿ ತೊಡಗದಿದ್ದರೂ ಅವಳ ಧ್ವನಿಯ ಅನುರಣಿತಕ್ಕೆ ಅವನು ಬಯಸಿಹನು ಎಂದರಿತು ಮತ್ತೇ ಮುಂದುವರೆಸಿದಳು.
” ಈ ವಿಸ್ಮಯಶೀಲ ನಿಸರ್ಗಕ್ಕೂ ನಿನ್ನ ಘನತೂಕದ ವ್ಯಕ್ತಿತ್ವಕ್ಕೂ ತುಂಬಾ ಸಾಮ್ಯವುಂಟು ಕಣೋ! ಈ ಅಗಾಧ ಆಕಾಶದಂತೆಯೇ, ಆ ಅಗಣಿತ ನಕ್ಷತ್ರಗಳೂ, ಅಪರಿಮಿತ ಆಳವುಳ್ಳ ಸಾಗರವೂ, ಗಗನಚುಂಬಿ ಪರ್ವತ ಶಿಖರಗಳೂ, ಅದ್ವಿತೀಯ ಶಕ್ತಿಸಾರವಾದ ಅಗ್ನಿಯೂ,ಕೈಗೆಟುಕದ ಸೂರ್ಯೋದಯ-ಅಸ್ತಗಳೂ; ಎಲ್ಲವೂ , ಎಲ್ಲವೂ ನಿನ್ನ ಇರುವಿನ ನೆನಪನ್ನು ಹೊತ್ತು ತರುತ್ತವೆ. ಈ ಸಾಂದರ್ಭಿಕ ಮಾತು, ಅತಿರೇಕವೆಂದೆನಿದರೂ ಸುಳ್ಳಲ್ಲ.‌ ನೀನೆಂದೂ ನಿನ್ನ ಘನತೆಗೆ ವ್ಯತಿರಿಕ್ತವಾಗಿ ನಡೆದಿಲ್ಲವಾದರೂ, ನಿನ್ನ ಚಿತ್ರ ನನ್ನ ಸ್ಮೃತಿ ಪಟಲದಲ್ಲಿ ಯಾವಾಗಲೂ ‘ಅನಾದಿಅನಂತ ಯೋಗೇಶ್ವರ’ ನಾಗಿಯೇ ಇದ್ದೀತು.”
ಪ್ರತ್ಯುತ್ತರವಾಗಿ ಅವಳಿಗೆ ಮತ್ತೆ ಮೌನವೇ ದೊರಕಿತು. ಆದರೆ ಈ ಬಾರಿ ಅವನ ಕಂಗಳಲ್ಲಿ ಅವಳ ಪ್ರತಿಬಿಂಬದ ಬದಲು ಅಮೃತ ಬಿಂದುಗಳ ಕೊಳವೊಂದು ಕಂಡಿತು. ತುಸುಕಾಲ ಮಾತುಗಳ ಅವಶ್ಯಕತೆ ಇಲ್ಲವಾಗಿ ಮೌನವೇ ಸನ್ನಿವೇಶದ ಅಧಿಪತ್ಯವನ್ನು ವಹಿಸಿತ್ತು. ರಾತ್ರಿಯಲ್ಲಿ ಮಾತ್ರ ಕೇಳುವ ಕೀಟಗಳ ಜೀರ್ದನಿ, ಬೀಸುತ್ತಿದ್ದ ಗಾಳಿಗೆ ತೂಗುತ್ತಿದ್ದ ಮರಗಳ ಪಿಸುದನಿ, ಹತ್ತಿರದಲ್ಲೇ ಹರಿಯುತ್ತಿದ್ದ ತಾಯಿಕಾವೇರಿಯ ಮಂಜುಳದನಿ, ದೂರದಲ್ಲೆಲ್ಲೋ ಸೀಳಿ ಬರುತ್ತಿದ್ದ ನರಿಯ ಊಳುದನಿ ಇವೆಲ್ಲವೂ ಆ ನೀರವತೆಯ ಅವಿಭಾಜ್ಯ ತರಂಗಗಳಾಗಿದ್ದವು. ಇವುಗಳ ಮಧ್ಯೆ ನಿಟ್ಟುಸಿರುಗಳ ಸ್ವರವೂ ಆಗೀಗ ಕೇಳಿಬರುತ್ತಿತ್ತು.
” ನಮ್ಮಿಬ್ಬರ ಕವಲೊಡೆದ ದಾರಿಗಳನ್ನು ಮತ್ತೆ ಸಮಾನಾಂತರಗೊಳಿಸಿದ ಚೈತನ್ಯ ಶಕ್ತಿ ಯಾವುದೋ…?” ಎಂದವಳ ಪ್ರಶ್ನೆಗೆ
” ಆ ಶಕ್ತಿ ಯಾವುದೇ ಇರಲಿ‌‌. ಈ ನಮ್ಮಿಬ್ಬರ ವಿಶಿಷ್ಟವಾದ ಸ್ನೇಹ, ಇರುವ ಹಾಗೆಯೇ ಅತ್ಯಂತ ಮಧುರವಾಗಿದೆ‌. ಜಗತ್ತಿನ ಸಂಶೋಧಕ ಕಣ್ಣಿಗೆ ನಾವು ಸತಿಪತಿಯಾಗದಿದ್ದರೂ, ನಮ್ಮನಮ್ಮ ಅಂತರ್ ದೃಷ್ಟಿಯಲ್ಲಿ ನಮಗೆ ಅದರ ಅನಿವಾರ್ಯತೆ ಇಲ್ಲ. ಈ ಸಂಬಂಧ, ಅದಕ್ಕಿಂತಲೂ ಉತ್ಕೃಷ್ಟವಾದದ್ದು, ಭವಬಂಧನದ ಮೇರೆ ಮೀರಿದ್ದು.
ಇಲ್ಲಿ ಬೇಡಿಕೆ, ಅಪೇಕ್ಷೆ, ನಿಗ್ರಹ ,ಪೂರ್ವಾಗ್ರಹ ಇತ್ಯಾದಿ ಋಣಾತ್ಮಕ ಗುಣಗಳಿಗೆ ಅವಕಾಶವಿಲ್ಲ. ಬರೀ ನಿಃಸ್ವಾರ್ಥವಾದ, ನಿಃವ್ಯಾಜ್ಯವಾದ ಅನುರಾಗ , ಸಾದರನೀಯ ಆರಾಧನೆ ಮತ್ತು ಹೃತ್ಪೂರ್ವಕ ಸಮರ್ಪಣೆಯುಳ್ಳ ಬಾಂಧವ್ಯದ ಬೆಸುಗೆಯುಂಟು‌. ಅದೇ ಕಾರಣಕ್ಕಾಗಿಯೇ ಈ ನಂಟು, ನಿಯಮಾವಳಿ/ ಕಟ್ಟುಪಾಡುಗಳಿಗೆ ಒಳಪಡದೇ ಯಾವುದೋ ಕ್ಷುಲ್ಲಕ ಪರಿಧಿಗೋ, ಪ್ರಮಾಣಕ್ಕೊ, ಪುರಾವೆಗಳಿಗೊ ಸಿಲುಕದೇ ಅತೀತವಾದದ್ದು!

ಮಾಯಾಲೋಕಗಳು

ಅಜ್ಜಿ ಕಥೆ

ನನ್ನ ಮೊಮ್ಮಕ್ಕಳು ರಜಾ ಬಂದಾಗ ನಮ್ಮ ಮನೆಗೆ ಬರುತ್ತಾರೆ. ಬಂದಾಗ ಅಜ್ಜಿ ಕತೆ ಹೇಳು ಅಂತ ಕೇಳುತ್ತಾರೆ. ಆಯಿತು. ಕೇಳಿ. ಇದು ನಡೆದ ಸಮಾಚಾರ. ಸುಮಾರು 100 ವರ್ಷ ಕಿಂತ ಮುಂಚೆ ನಡೆದ ಕಥೆ. ನನಗೆ ನನ್ನ ಅಮ್ಮ ಹೇಳಿದ್ದು. ಏನಪ್ಪಾ ಅಂದರೆ ನಾವು ಮೂಲತ: ಮಹಾರಾಷ್ಟ್ರದವರು. ಮಾದ್ವ ಬ್ರಾಹ್ಮಣರು. ವಿಪರೀತ ಮಡಿ, ಮೈಲಿಗೆ ಗಲಾಟೆ. ಮನೆಯ ಹೆಂಗಸರು ತುಂಬಾ ಜೋರು. ಆ ಕಾಲದಲ್ಲಿ ಕಚ್ಚೆ ಹಾಕಿಕೊಂಡು ಕುದರೆ ಸವಾರಿ ಮಾಡುತ್ತಿದ್ದರಂತೆ  ಅವರು ಪೂನಾ ಹತ್ತಿರ ಒಂದು ಊರಲ್ಲಿ ಇದ್ದರಂತೆ. ಪೇಶ್ವೆಗಳ ಹತ್ತಿರ ಸಿಪಾಯಿ ಗಳಾಗಿ ಇದ್ದರಂತೆ. ಇವರಿಗೆ ಮೈಸೂರಿನಲ್ಲಿ ನೆಂಟರು ಮದುವೆಗೆ ಬರಬೇಕೆಂದು ಕರೆದರಂತೆ. ಆ ಕಾಲದಲ್ಲಿ ಸಂಚಾರ ಮಾಡುವುದು ಬಹಳ ಕಷ್ಟ. ಕುದರೆಮೇಲೆ ಕಾಡಿನ ದಾರಿಯಲ್ಲಿ ಹೋಗಬೇಕು. ಚಿಕ್ಕ ಚಿಕ್ಕ ಹಳ್ಳಿಗಳಲ್ಲಿ ರಾತ್ರಿ ಇರಬೇಕು. ಸಾಮಾನ್ಯವಾಗಿ ಮರಾಟಿಗ ಹೆಂಗಸರು ಗಟ್ಟಿಗರು, ಸರಿ ಅಂತ ಪ್ರಯಾಣಕ್ಕೆ ಎಲ್ಲ ಸಿದ್ದಮಾಡಿಕೊಂಡು ಗಂಡ ಮತ್ತು ಹೆಂಡತಿ ಎರಡು ಕುದರೆ ಮೇಲೆ ಹೊರಟರಂತೆ. ಸುಮಾರು ದಿನಗಳು ಕಳೆದವು. ಎಷ್ಟೂ ಕಾಡು, ಮೆಡು ಗಲ್ಲಿ ಸುತ್ತಿ, ನಾನಾ ತರಹದ, ಕಷ್ಟ ಅನುಭವಿಸಿದರು. ಹುಲಿ, ಸಿಂಹ, ಹಾವು, ಜಿಂಕೆ ನಾನಾ ತರಹದ ಪ್ರಾಣಿಗಳನ್ನು ನೋಡಿದರಂತೆ. ಅವರ ಹತ್ತಿರ ಬಂದೂಕು ಇತ್ತು. ಒಂದು ಸಲ ಅವರ ಹತ್ತಿರ ಇದ್ದ ತಿಂಡಿ ಸಾಮಾನು ಮುಗಿದುಹೋಯ್ಯಂತೆ. ಕಾಡಿನಲ್ಲಿ ಏನು ಮಾಡುವುದು ಅಂತ, ಜೇನು, ಹಣ್ಣು ಸಿಗುತ್ತಾ ಅಂತ ನೋಡುತ್ತಾ ಇದ್ದರಂತೆ. ಒಂದು ಬಂಡೆ ಮೇಲೆ ದೊಡ್ಡ ಮುದ್ದೆ ಕಾಣಿಸಿತು. ಹೋಗಿ ನೋಡಿದರೆ ಬೇಲದ ಹಣ್ಣು, ಜೇನುತುಪ್ಪ ಕಲಿಸಿ,ಇತ್ತಂತ್ತೆ. ಇವರು ಹಸಿವೆಯನ್ನು ತಡಯಲಾರದೆ ತಿಂದರಂತೆ. ಅಷ್ಟರಲ್ಲಿ ಒಂದು ಕರಡಿ, ತನ್ನ ಮಕ್ಕಳಲಂದಿಗೆ ಬರುತ್ತಾ ಇದ್ದಿದ್ದನ್ನು ನೋಡಿ, ಇಬ್ಬರು, ಕುದರೆಮೇಲೆ ಹತ್ತಿ ಓಡಿಹೋಗಿ ಜೀವ ಉಳಿಸಿಕೊಂಡರು.  ಕರಡಿ ಪಾಪ!ತನ್ನ ಮಕ್ಕಳಿಗೆ  ತಯಾರಿಸಿದ ಬೆಲದ ಹಣ್ಣು ಜೇನು ತುಪ್ಪದ ಫಲಾಹಾರ,ನಮ್ಮ ನೆಂಟರು ತಿಂದುಬಿಟ್ಟರು. ಕರಡಿ ಅಟ್ಟಿಸಿಕೊಂಡು, ಬರುವವಷ್ಟ್ರಲ್ಲಿ, ಇವರು ಕುದರೆಮೇಲೆ ದೌಡಾಯಿಸಿದರು.
ಹೀಗೆ ನಮ್ಮ ಅಮ್ಮ ನಮಗೆಲ್ಲ ಬೆಳದಿಂಗಳ ಊಟ ಕೈ ತುತ್ತು ಹಾಕುತ್ತ ಹೇಳುತ್ತಿದರು.

'ಅಜ್ಜಿ ಇದು ನಿಜವಾದ ಘಟನೆನಾ ಅಥವಾ ಬರಿ ಕಥೆನಾ?' ' ನನ್ನ ತಾಯಿಯ ಮುತ್ತಜ್ಜಿ,ಮುತ್ತಜ್ಜ ಪೂನಾದಿಂದ ಮೈಸೂರಿಗೆ ವಲಸೆಬಂದದ್ಫು ನಿಜ. ಕುದುರೆ ಮೇಲೆ ಕಾಡಿನಲ್ಲಿ ಬಂದಿದ್ಫು ನಿಜ. ಮಿಕ್ಕಿದೆಲ್ಲ ನನಗೆ ಗೊತ್ತಿಲ್ಲ' ಅಂತ ಜಾರಿಕೊಂಡೆ. ಇಲ್ಲದಿದ್ದರೆ Where is the proof? ಅಂದರೆ ಏನು ಮಾಡಲಿ? ನಾವೆಲ್ಲ ನಮ್ಮ ಅಮ್ಮ ಹೇಳಿದ ಕಥೆ 200% ನಂಬುತ್ತೀವಿ. ಒಂದು ಜನರೇಶನ್ ಗೆ ಮುಂದಿನ ಜನರೇಶನ್ ಕತೆ ಇನ್ನು ಜೀವಂತ ವಾಗಿದೆ.

~ ವತ್ಸಲಾ ರಾಮಮೂರ್ತಿ

ಜಾಹೀರಾತುಗಳ ಮಾಯಾಲೋಕ

ಇದೀಗ ಇಲ್ಲಿ  ಸಂಜೆಗಳೇ ಇಲ್ಲದ  ಬರೀ ಬೆಳಗು – ರಾತ್ರಿಗಳ ನವೆಂಬರ್. ಚಳಿರಾಯ ನಿಧಾನವಾಗಿ ತನ್ನ ಪಾದವೂರುವ  ಸನ್ನಾಹದಲ್ಲಿದ್ದಾನೆ.  ಚಕ್ಕುಲಿ- ಕರಚಿಕಾಯಿ, ದೇಸಿ ಘೀ ಯ ಬೇಸನ್ ಉಂಡಿಗಳ ದೀಷಾವಳಿ ಫರಾಳದ  ಪ್ರಭಾವವೋ ಅಥವಾ ಚಳಿರಾಯನ ಕರಾಮತ್ತೋ ಅಂತೂ ಸಣ್ಣನೆಯ ಕೆಮ್ಮು, ಗಂಟಲ ಕೆರೆತ,  ಮೈಕೈ ನೋವು...ಹೀಂಗ  ಒಂದೊಂದೇ ಕಿರಿಕರಿಗಳು ,ಕಾಡಲಿಕ್ಕೆ ಶುರುವಾಗೂ ದಿನಗಳಿವು. 

‘ ಗಲೇಂ ಮೆ ಖರಾಶ್ ಮಜೇದಾರ್ ಸ್ಟೆಪ್ಸಿಲ್ಸ’ , ‘ ವಿಕ್ಸ್ ಕೀ ಗೋಲಿ ಲೋ ಖಿಚ್ ಖಿಚ್ ದೂರ್ ಕರೋಂ ‘
ಇದೇನಿದು ಜಾಹೀರಾತು ಶುರು ಮಾಡಿದ್ರೆಲಾ ಅಂತೀರೇನು? ಹೌದ ನೋಡ್ರಿ ಈ ಜಾಹೀರಾತುಗಳ ಮಹಿಮಾ ಮತ್ತ ಮಾಯಾ ( ಮುನ್ನಾಭಾಯಿಗತೆ ಯೆ ಮಹಿಮಾ ಔರ್ ಮಾಯಾ ಕೌನ್ ಹೈ ಅಂತ ಮಾತ್ರ ಕೇಳಬ್ಯಾಡ್ರಿ ಮತ್ತ) ಭಾಳ ದೊಡ್ಡದು ಬಿಡ್ರಿ. ಖರೇ ಹೇಳಬೇಕಂದ್ರ ಈ ಇಂಟರ್ ನೆಟ್ , ಗೂಗಲ್ ಮಹಾಶಯ ಸಹಾಯಕ್ಕಿಲ್ಲ ದ ನಮ್ಮ ಆಗಿನ ದಿನಗಳಲ್ಲಿ ನಮಗೇನರೇ ಅಲ್ಪ-ಸ್ವಲ್ಪ ಲೋಕಜ್ಞಾನ, ಸಾಮಾನ್ಯ ಜ್ಞಾನ ಇತ್ತು ಅಂದ್ರ ಅದರಾಗ ಈ ಜಾಹೀರಾತುಗಳದೇ ದೊಡ್ಡ ಪಾತ್ರ ಅಂತ ನಿಸ್ಸಂಶ ಯವಾಗಿ ಹೇಳಬಲ್ಲೆ.
ಡಮಡಮು ಅಂತ ಬಾರಸಕೋತ ಮಂಗ್ಯಾ ಆಡಸಂವಾ ಬಂದ್ರ, ‘ಮನ ಡೋಲೆ ಮೋರಾ ತನ್ ಡೋಲೆ’ ಅಂತ ಪುಂಗಿ ಊದೋ ಹಾವಾಡಿಗನ ಆ ಬಿದಿರನ ಬುಟ್ಟಿ ಕಂಡ್ರ, ಬಾರಕೋಲಿನ ಚಾಟಿ ಮೈಮೇಲೆ ಬೀಸಕೋತ ‘ ನೀರ ಹಾಕ್ರಿ, ನೀರ ಹಾಕ್ರಿ’ ಅಂತ ದುರಗಮುರಗ್ಯಾ ಬಂದ್ರ , ಆನೆಯೋ- ಒಂಟೆಯೋ ಸವಾರಿಗಾಗಿ ಬಂದ್ರ, ಯಾರೋ ಕೌಲೆತ್ತು ತಂದ್ರ, ಆಕಾಶದಾಗೊಂದು ವಿಮಾನ ಹಾರಿದ್ರ ಮನೆಯೊಳಗಿಂದ ಹೊರಗೆ ಓಡೋಡಿ ಬಂದು ಜಗತ್ತಿನ ಅದ್ಭುತಗಳೆಲ್ಲ ಅಲ್ಲೇ ಮೇಳೈಸಿಬಿಟ್ಟಾವೇನೋ ಅನ್ನೂಹಂಗ ಬೆರಗುಗಣ್ಣಿಂದ ನೋಡುತ್ತ ಅವನ್ನೆಲ್ಲ ಆಸ್ವಾದಿಸುವ ಮುಗ್ಧ ಬಾಲ್ಯ – ಹದಿಹರೆಯಗಳವು. ಹೊಸತಾಗಿ ಆಗಷ್ಟೇ ಅವರಿವರ ಮನೆಯಲ್ಲಿ ಸಣ್ಣದಾಗಿ ಒಂದೊಂದೇ Black & white, portable T.V.ಗಳು ಬರಲು ಶುರುವಾಗಿದ್ದ ದಿನಗಳು. ಖರೇ ಹೇಳಬೇಕಂದ್ರ ಆಗ ಈ ಟಿ ವಿ ವೈಯಕ್ತಿಕ ಸ್ವತ್ತಾಗಿರಲಿಲ್ಲ. ಮನೆಯವರು ದುಡ್ಡನ್ನು ಪಾವತಿಸಿ T.V ತಂದರೂ ಅದರ ಮೇಲೆ ಇಡಿಯ ಓಣಿಯ ಜನರ ಅಧಿಕಾರವಿರುತ್ತಿತ್ತು. ಈಗಿನವರಿಗೆ ಇದು ನಂಬಲಸಾಧ್ಯವಾದರೂ ನಮ್ಮ ಕಾಲದ ಸೋಳಾಣೆ ಸತ್ಯ,ಶಂಬರ್ ಟಕ್ಕೆ ಖರೇ ಮಾತಾಗಿತ್ತು ಇದು.

ನಮ್ಮ ಓಣ್ಯಾಗ ಮೊದಲ ಉಕ್ಕಲಿ ಮಾಮಾ ಅವರ ಮನಿಗೆ ಟಿ.ವಿ. ಬಂದಿತ್ತು. ಅವರ ಮನೆಯ ಮೂರುಜನ ನಮ್ಮ ಮನೆಯ ಆರು ಜನ ಅದನ್ನು ನೋಡಲು ಕೂಡುವುದಿತ್ತು. ಆ ಟಿ.ವಿ. ಕಾರ್ಯಕ್ರಮಗಳಿಗೆ ತಕ್ಕಹಂಗ ಅವರು ತಮ್ಮ ಊಟ, ತಿನಸು ,ಛಾ ಮುಗಸಕೊಂಡು ಎಷ್ಟೋ ಸಲ ನಮಗೂ ಕೊಟ್ಟು ನಮ್ಮನ್ನೆಲ್ಲ ಕುರ್ಚಿ, ದಿವಾನದ ಮೇಲೆ ಕೂಡಿಸಿ ಪಾಪ ಅವರೇ ಕೆಳಗೆ ಚಾಪೆ ಮ್ಯಾಲೆ ಕೂಡೋ ಪಾಳಿ ಬರತಿತ್ತು. ಆದ್ರ ಮಜಾ ಅಂದ್ರ ಇವುಗಳ ಬಗ್ಗೆ ಅವರಿಗೂ ಬೇಸರವಿರಲಿಲ್ಲ. ಉಲ್ಟಾ ಎಂದರೇs ಒಮ್ಮೆ ನಾವು ಹೋಗದಿದ್ರ ಅವರ ಮಗಳು ರೇಖಾ ಕಟ್ಟಿ ಮ್ಯಾಲೆ ನಿಂತು ‘ ಚಿತ್ರಹಾರ್ ಶುರು ಆತು ಲಗೂನೇ ಬರ್ರಿ’ ಅಂತ ಕೂಗಿ ಕರೆಯುತ್ತಿದ್ದಳು. ರಾತ್ರಿ ಹೊತ್ತು ಪ್ರಸಾರವಾಗುತ್ತಿದ್ದ ‘ ಕಿಲ್ಲೆ ಕಾ ರಹಸ್ಯ’ ನೋಡಲು ಅವರು ನಿದ್ದೆ ಬಂದಿದ್ದರೂ ತೂಕಡಿಸುತ್ತ ನಮಗಾಗಿ ಕಾಯುತ್ತಿದ್ದದು ನನಗೀಗಲೂ ನೆನಪಿದೆ.

84 ರಲ್ಲಿ ನಮ್ಭ ಪ್ರಧಾನಿ ಇಂದಿರಾಗಾಂಧಿಯವರ ಹತ್ಯೆಯಾದಾಗಲಂತೂ ನಮ್ಮ ಹಿಂದಿನ ಓಣಿಯ ಗುನ್ನಾಳಕರ ಅವರು ತಮ್ಮ ಟಿ.ವಿ.ಯನ್ನು ಮನೆ ಯ ಅಂಗಳದಲ್ಲಿಟ್ಟು ನೂರಾರು ಮಂದಿಗೆ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದರು. ಕ್ರಿಕೆಟ್ ಮ್ಯಾಚ್ ಗಳು ಇದ್ದರೂ ಅಷ್ಟೇ. ಪಡಸಾಲೆಯ ಟಿ.ವಿ. ಅಂಗಳಕ್ಕೇ ಬರುತ್ತಿತ್ತು.

ನಂತರ ಗೌಡರ್ ಅವರ ಮನಿಗೆ ಕಲರ್ ಟಿ.ವಿ. ಬಂದು ನಾವು ಐದು ಜನ ಮಕ್ಕಳು, ಅವರ ಮನೆಯ ಆರು ಜನ ಮಕ್ಕಳು ತಮ್ಮ ತಮ್ಮ ಸ್ನೇಹಿತರಾದಿಯಾಗಿ ಬಂಧುಬಳಗ ಸಮೇತವಾಗಿ ಸತ್ಯನಾರಾಯಣ ಪೂಜೆಯಷ್ಟೇ ಶ್ರದ್ಧೆಯಿಂದ ರಮಾನಂದ ಸಾಗರರ ರಾಮಾಯಣ, ಬಿ.ಆರ್. ಛೋಪ್ರಾರ ಮಹಾಭಾರತ ನೋಡುತ್ತಿದ್ದೆವೆನ್ನುವುದು ಬಹಳ ಸುಂದರ ನೆನಪು. ಗೌಡರ್ ಮಾಲಾಕಾಕು ಅಂತೂ ಸ್ನಾನ ಮಾಡಿ ಒಗೆದ ಬಟ್ಟೆ ತೊಡದೇ ಹೋದ್ರ ರಾಮಾಯಣ – ಮಹಾಭಾರತ ನೋಡಲಿಕ್ಕೆ ಎಂಟ್ರಿ ಪಾಸ್ ನೇ ಕೊಡತಿದ್ದಿಲ್ಲ. ಹಿಂಗಾಗಿ ನಾವು ರಾಮ- ಸೀತಾನ ಬಗ್ಗೆ ಭಯಭಕ್ತಿ ಇರದಿದ್ರ ಅಷ್ಟೇ ಹೋತು ಮಾಲಾಕಾಕುಗ ಅಂಜಿ ರವಿವಾರ ಇದ್ರೂ ಲಗೂಲಗೂ ಸ್ನಾನ – ಹೆರಳು,ಎಲ್ಲಾ ಮುಗಿಸಿಕೊಂಡು ಲಕಾಲಕಾ ತಯಾರಾಗಿ ಬಿಡತಿದ್ವಿ ಅನ್ರಿ.

ಈಗ ಮನ್ಯಾಗ 65, 75 ಇಂಚಿನ ಟಿ.ವಿ., ಹೋಮ್ ಥೇಟರ್ ಅಂತ ಸುಟ್ಟುಸುಡುಗಾಡು ನೂರಾ ಎಂಟು ಇದ್ರೂ ಆಗಿನ ಮಜಾ ಇಲ್ಲ ಅನ್ನೂದು ನನ್ನೊಬ್ಬಳ ಅನಿಸಿಕೆನೋ ಅಥವಾ ನಿಮ್ಮದೂ ಹೌದೋ ನನಗೆ ‘ ಗೊತ್ತಿಲ್ಲ.

ಹೀಂಗ ಈ ಟಿ.ವಿ. ಬಂದಮ್ಯಾಲೆ ಜಾಹೀರಾತುಗಳ ಒಂದು ಸುಂದರ ಪ್ರಪಂಚ ನಮ್ಮ ಕಣ್ಣೆದುರು ತೆರೆದುಕೊಂಡುಬಿಟ್ಟಿತು. 5-10 ಪೈಸೆಯ ಪೆಪ್ಪರ್ ಮಿಂಟೋ, ಕಿಸ್ ಮಿ ಚಾಕಲೇಟುಗಳಿಗಷ್ಟೇ ಪರಿಚಿತರಾಗಿದ್ದ ನಮಗೆ ‘ ಕಿತನಾ ಮಜಾ ಆಯೇರೆ ದುನಿಯಾ ಡೇರಿ ಮಿಲ್ಕ್ ಕಿ ಬನ್ ಜಾಯೇರೆ’ ಅಂತ ಚಾಕಲೇಟಿನಂಥ ಹೊಸ ಜಗತ್ತನ್ನು ತೋರಿಸಿದ್ದೇ ಈ ಜಾಹೀರಾತುಗಳು. ‘ಕುಛ್ ಬಾತ್ ಹೈಂ ಹಮ್ ಸಭೀಮೆಂ..ಖಾಸ್ ಹೈಂ..ಕುಛ್ ಸ್ವಾದ್ ಹೈಂ..ಕ್ಯಾ ಸ್ವಾದ್ ಹೈಂ ಜಿಂದಗಿ ಮೆಂ’ ಅಂತ ಶುರುವಾಗೋ ಡೇರಿ ಮಿಲ್ಕ್ ನ ಜಾಹೀರಾತು ನಮ್ಮ ಬದುಕಿನಾಗೂ ಸ್ವಾದ ತುಂಬಿ ಖಾಸ್ ಆದ್ವು ಇದರ ಎಲ್ಲಾ ಜಾಹೀರಾತುಗಳೂ ಒಂದೊಂದೂ ಸುಂದರ..ಒಂದೊಂದೂ ಹೃದಯಸ್ಪರ್ಶಿ. ಅವುಗಳನ್ನು ತಯಾರಿಸಿದವರ ಸೃಜನಶೀಲತೆಗೆ ನನ್ನ ಶರಣು.

‘ ಆಡು ಮುಟ್ಟದ ಸೊಪ್ಪಿಲ್ಲ’ ಅನ್ನೂಹಂಗ ಈ ಜಾಹೀರಾತುಗಳು ಕೈಯಾಡಿಸದ ಕ್ಷೇತ್ರಗಳೇ ಇಲ್ ಅನ್ನಬಹುದು. ಆಗಷ್ಟೇ ಹುಟ್ಟಿದ ಮಗುವಿನ ಪಿಂಕೂ ಗ್ರೈಪ್ ವಾಟರ್ ನಿಂದ ಹಿಡಿದು ನಿಮ್ಮ ಮಕ್ಕಳ ಎತ್ತರ, ತೂಕಗಳಿಗಾಗಿ ಕೋಂಪ್ಲಾನ್ – ಹಾರ್ಲಿಕ್ಸ್ ಗಳವರೆಗೆ, ಸ್ವಾದ್ ಭರೆ ಶಕ್ತಿಭರೆ ಪಾರ್ಲೆ ಜಿ ಯ ಜೊತೆಗೆ ನಾವು ಯಾವ ಚಹಾ ಕುಡಿಯಬೇಕು, ಯಾವ ಹಪ್ಪಳ ತಿನ್ನಬೇಕು, ನಲ್ಲನ ಮನ ಗೆಲ್ಲಲು ಅಡುಗೆಗೆ ಯಾವ ಮಸಾಲೆ ಉಪಯೋಗಿಸಬೇಕು, ಬಿರಿಯಾನಿ ರುಚಿಯಾಗಲು ಯಾವ ಅಕ್ಕಿ ಹಾಕಬೇಕು ? ಬೆನ್ನು – ಸೊಂಟ- ಹಲ್ಲು ನೋವುಗಳಿಗೆ ಏನು ಮಾಡಬೇಕು? ಯಾವ ಸೋಪ್, ಕ್ರೀಂ, ಪೌಡರ್ ನಿಂದ ನಾವು ಚಿರ ಯೌವನಿಗರಾಗಬಹುದು? ಯಾವ ಶಾಂಪೂ, ಹೇರ್ ಆಯಿಲ್ ಗಳಿಂದ ನಾವು ನಾಗವೇಣಿಯರಾಗಬಹುದು? ಯಾವ ಶೇವಿಂಗ್ ಕ್ರೀಂ, ಡಿಯೊಡ್ರಂಟ್ ಗಳನ್ನು ಬಳಸಿದ್ರ ಹುಡುಗಿಯರು ಮೈಮೇಲೆ ಬಂದು ಬೀಳಬಹುದು? ಏನು ಮಾಡಿದರೆ ಮನೆಯ ಪೀಠೋಪಕರಣಗಳನ್ನು ಆಜೀವಪರ್ಯಂತ ಮುರಿಯದಂತೆ ಇಟ್ಟುಕೊಳ್ಳಬಹುದು? ಯಾವ ಗಾಡಿ, ಬೈಕು ತಗೊಂಡ್ರ ಎಷ್ಟೆಷ್ಟು ಮೈಲೇಜು, ಏನೇನು ಲಾಭ? ಯಾವ ಚಪ್ಪಲಿ, ಶೂಸ್ ಬಳಸಬೇಕು? ಯಾವ ಒಳ ಉಡುಪುಗಳನ್ನು ಧರಿಸಬೇಕು? ಯಾವ ಪೆನ್ನು- ಪೆನ್ಸಿಲ್ – ನೋಟ್ ಬುಕ್ ಗಳನ್ನು ಉಪಯೋಗಿಸಿದ್ರ ಛಂದನೆಯ – ದುಂಡನೆಯ ಅಕ್ಷರ ಬರೆದು ವಿದ್ಯಾವಂತರಾಗಬಹುದು? ಕೊಳೆಯಾದ ಬಟ್ಟೆಗಳನ್ನು ಹೆಂಗ ಕೊಕ್ಕರೆಯಂತೆ ಬಿಳಿ ಶುಭ್ರ ಮಾಡಬಹುದು .ಇತ್ಯಾದಿ ಅಮೂಲ್ಯ – ಅತ್ಯಮೂಲ್ಯ ವಿಚಾರಗಳನ್ನೆಲ್ಲ ನಮ್ಮ ತಿಳಿವಿಗೆ ತುರುಕಿದ್ದೇ ಈ ಜಾಹೀರಾತುಗಳಂದ್ಲ ತಪ್ಪಿಲ್ಲ.
ಇನ್ನು ಕೆಲವೊಂದು ಜಾಹೀರಾತುಗಳಂತೂ ನಮ್ಮ ನೆಚ್ಚಿನ ನಟ- ನಟಿಯರ ಸಲುವಾಗಿ ಫೇವರಿಟ್. ‘ಲಿಮ್ಕಾ..ಲಿಮ್ಕಾ’ ಎಂದು ಹಾಡುವ , ಲಖಾನಿ ಹವಾಯಿ ಚಪ್ಪಲ್ ಹಾಕಿಕೊಂಡು ಕುಣಿಯುವ ಸಲ್ಮಾನ್ ಖಾನ್ ಇರಲಿ, ‘ ಡಾಬರ್ ಆಮ್ಲಾ ಕೇಶ್ ತೈಲ್’ ಅಂತ ಕಪ್ಪನೆಯ ಕೇಶರಾಶಿಯನ್ನು ಹಾರಿಸುತ್ತ ತಿರುಗುವ ಜಯಪ್ರದಾ ಇರಲಿ, ಬಾರಾತಿಯೋಂ ಕಾ ಸ್ವಾಗತವನ್ನು ಪಾನ್ ಪರಾಗ್ ಪಾನ್ ಮಸಾಲಾದಿಂದ ಮಾಡುವ ಶಮ್ಮಿಕಪೂರ್, ಅಶೋಕ ಕುಮಾರ್ ಇರಲಿ, ‘ what an Idea sir ji’ ಎನ್ನುವ ಅಭಿಷೇಕ್ ಬಚ್ಚನ್ ಇರಲಿ, Dr.fixit ನ ಅಮಿತಾಭ್ ಬಚ್ಚನ್ ಇರಲಿ, ತೀರ ಇತ್ತೀಚಿನ cleethorpes max fresh ನ ರಣವೀರ ಸಿಂಗ್ ಇರಲಿ, ಮಧುಬಾಲಾನಿಂದ ಹಿಡಿದು ಮಾಧುರಿ ದೀಕ್ಷಿತವರೆಗಿನ Lux ಸೋಪಿನ ರೂಪದರ್ಶಿಯರಿರಲಿ ಎಲ್ಲರೂ..ಎಲ್ಲವೂ ನಮ್ಮ ಫೇವರಿಟ್. ಯಾಕಂದ್ರ ನಮಗ ಬಾಲಿವುಡ್ ತಾರಾಮಣಿಗಳಂದ್ರ ಅದೇನೋ ಹುಚ್ಚು ಸೆಳೆತ – ಪ್ರೀತಿ – ಅಪನಾಪನ್. ಇನ್ನ ಅವರು ಮಾಡಿದ ads ಅಂದ್ರ ಮುಗದೇ ಹೋತ. ಅಲ್ಲೇನ್ರಿ?

ಅಲ್ರೀ ಎಲ್ಲಾಬಿಟ್ಟು ಯಕ:ಶ್ಚಿತ್ ಉಪ್ಪಿನ ಬಗ್ಗೆನೂ ಎಷ್ಟೆಲ್ಲ ಜಾಹೀರಾತುಗಳ್ರಿ..ಅದ್ಯಾಕ ಯಕ:ಶ್ಚಿತ್ ಬಿಡ್ರಿ ಇದರ ಮಹತ್ವ ಏನು ಕಡಿಮೆದ? ಇದರ ಸಲುವಾಗಿ ದಂಡಿ ಸತ್ಯಾಗ್ರಹನೇ ನಡದು ಇತಿಹಾಸದಾಗೂ ಅದಕ್ಕೊಂದು ಸ್ಥಾನ ಸಿಕ್ಕೇಬಿಟ್ಟದ. ಟಾಟಾ ನಮಕ್ ದೇಶ್ ಕಾ ನಮಕ್- ಅದರಾಗ ಶುದ್ಧತೆ, ಅಯೋಡಿನ್ ಗಳಂತೂ ಅವನೇ ಅವ ಜೋಡಿಗೆ ಚುಟಕಿ ಭರ್ ಇಮಾನದಾರಿನೂ ಅದರಾಗಿರತದ ಅನ್ನೂದು ad ನೋಡೇ ಗೊತ್ತಾಗಿದ್ದು. ‘ ಡರ್ ಕೆ ಆಗೇ ಜೀತ್ ಹೈ’ ಎಂಬ ಅಮೂಲ್ಯ ವಿಚಾರ ತಿಳಿದದ್ದೂ ಈ ಜಾಹೀರಾತಿನಿಂದಲೇ.

ಇನ್ನ ನಾವು ನಮ್ಮ ರೆಡ್ ಲೇಬಲ್ ಟೀ ಯಿಂದ Taj ಗೆ ಪಕ್ಷಾಂತರ ಮಾಡಿದ್ದಕ್ಕೂ ಈ ಜಾಹೀರಾತೇ ಕಾರಣ. ಉದ್ದನೆಯ ಗುಂಗುರು ಕೂದಲು ಹಾರಿಸುತ್ತ, ಬೆರಳುಗಳಿಂದ ತಬಲಾದ ಮೇಲೆ ನಾದದ ನರ್ತನ ಮಾಡುತ್ತ ಉಸ್ತಾದ್ ಝಾಕೀರ್ ಹುಸೇನ್ ‘ ವಾಹ್ ತಾಜ್ ಬೋಲಿಯೆ’ ಅಂತ ಸೇಳಿದ ಮ್ಯಾಲೆ ನಮಗೆ ಬ್ಯಾರೆ ಹಾದೀನೇ ಇದ್ದಿದ್ದಿಲ್ಲ ಬಿಡ್ರಿ.

‘ ದೋ ಮಿನಿಟ್’ ನ ಮ್ಯಾಗಿ ನನ್ನ ಮಕ್ಕಳ ಪ್ರೀತಿಯ ಭೋಜನ. ನನಗೂ ಅವಸರದ ಆಪ್ತಬಂಧು. ಪುಳಿಯೋಗರೆ, ಪಾವ್ ಭಾಜಿ ಮಸಾಲೆಗಳು , ಖರ್ರಂ ಖುರ್ರಂನ ಲಿಜ್ಜತ್ ಪಾಪಡ್ ಗಳು ನಮ್ಮ ಅಡುಗೆ ಮನೆಗೆ ಆಪ್ತವಾದದ್ದು ಜಾಹೀರಾತುಗಳ ಕಮಾಯಿನೇ.ಹಾಲು ಬೇಡವೆಂದ ಮಕ್ಕಳಿಗೆ compla, horlicks ಗಳ ಆಮಿಷವೊಡ್ಡಿ ಕುಡಿಸಿ ‘ಮೈ ಬಢ ರಹಾ ಹೂಂ ಮಮ್ಮಿ’ ಅಂತ ಅವರ ಪರವಾಗೆ ನಾನೇ ಅಂದುಕೊಂಡು ಖುಷಿಪಟ್ಟದ್ದು, ಬ್ಯಾಸಗ್ಯಾಗ ರಸನಾ, ಆಟ ಆಡಿ ಬಂದಕೂಡಲೇ glucon-D, ಥಂಡ್ಯಾಗ ಚ್ಯವನ್ ಪ್ರಾಶ್ ಹೀಂಗ ಮಕ್ಕಳ ಆರೋಗ್ಯದ ದೇಖರೇಕಿ ಬಗ್ಗೆ ಅತ್ಯಪರೂಪದ ಮಾರ್ಗದರ್ಶಿಗಳಾಗಿದ್ದವು.
ಈ ಮೈ ತೊಳೆವ ಸಾಬಾಣಿನ (soap) ಜಾಹೀರಾತುಗಳಂತೂ ನನ್ನ ಚಿತ್ತದಾಗ ಪಟ್ಟಾಗಿ ಕೂತಬಿಟ್ಟಾವ ಲಾ..ಲಲಾ..ಲ..ಲಾ ಅಂತ ಹಾಡಕೋತ ಸ್ವಚ್ಛ ಶುಭ್ರವಾದ ನದಿ- ಜಲಪಾತದಾಗ Liril soap ಹಿಡಿದು ಸ್ನಾನ ಮಾಡೋ ಆ ರೂಪದರ್ಶಿನ್ಶ ನೋಡಿದ್ರ ಬಚ್ಚಲಿನಾಗೇ ಹತ್ತು ಸಲ ನಮ್ಮ ಕೈಯಿಂದ ಜಾರಿ ಜಾರಿ ಬೀಳುತ್ತಿದ್ದ ಸೋಪ್ ನೆನೆಸಿಕೊಂಡು , ಇಂಥ,ಹರಿವ ನೀರಿನ ರಭಸದಾಗೊ,ಅದ್ಹೆಂಗಿನ್ನೂ ಜಾರದs ಅಕಿನ ಕೈಯಾಗೇ ಉಳದದ ಅನ್ಶೂದೇ ಸೋಜಿಗ ಅನಸತಿತ್ಯು ನನಗೆ. ಇನ್ನ ಹೊಸಬಟ್ಟಿ, ಬಿಳಿಬಟ್ಟಿ ಕೆಸರು ಮಾಡಿಕೊಂಡು ಬಂದ್ರ ಮಕ್ಕಳಿಗೆ ಬಯ್ಯದ s ‘ ದಾಗ್ ಅಚ್ಛಾ ಹೈ...surf excell hai na? ಅನ್ನುವ ನಗುಮೊಗದ ಅಮ್ಮಂದಿರೂ ನನಗ ಬ್ಯಾರೆ ಲೋಕದವರ ಹಂಗೇ ಕಾಣಸತಾರ. ಯಾಕಂದ್ರ ಸಣ್ಣವರಿದ್ದಾಗ ಹೊಸ ಬಟ್ಟೆ, ಬಿಳಿ ಬಟ್ಟೆ ಕಲೆ ಮಾಡಿಕೊಂಡ್ರ ಮಸ್ತ್ ಮಂಗಳಾರತಿ ಮಾಡಿಸಕೋತಿದ್ವಿ ಮನ್ಯಾಗ. ಈಗ ನಾನೂ ಮಕ್ಕಳಿಗೆ ಮಂಗಳಾರತಿ ಮಾಡದಿದ್ರೂ ‘ ಸ್ವಲ್ಪ ನೋಡಕೊಂಡು ಸಾವಕಾಶ ಮಾಡಲಿಕ್ಕೆ ಬರಂಗಿಲ್ಲ s?’ ಅಂತ ಅನ್ನಬಹುದೇ ಹೊರತು ‘ ದಾಗ್ ಅಚ್ಛಾ ಹೈ’ ಅನ್ನುವ ಸಹನಶೀಲತಾ ನನ್ನ ಹತ್ರ ಇಲ್ಲ.

ಒಟ್ಟಿನಾಗ ನನಗ ಈ ಜಾಹೀರಾತುಗಳ ತಯಾರಿಕೆ, ಹಣಹೂಡಿಕೆ, ಗಳಿಕೆ, ತಂತ್ರಜ್ಞಾನ ಇತ್ಯಾದಿಗಳ ಬಗ್ಗೆ ಅಷ್ಟೆಲ್ಲ ಜ್ಞಾನ ಇರದಿದ್ರೂ ಅವು ಕೊಡುವ ಮುದದ ಬಗ್ಗೆ ಬಹಳ ಖುಷಿ ಅನಸತದ. ಇವುಗಳ ಸತ್ಯಾಸತ್ಯತೆಗಳೇನೇ ಇರಲಿ ಸೆಕೆಂಡುಗಳ, ನಿಮಿಷಗಳ ಅತ್ಯಲ್ಪ ಅವಧಿಯಲ್ಲೇ ಅವುಗಳನ್ನು ಹೃದ್ಯವಾಗಿ ಪ್ರಸ್ತುತ ಪಡಿಸುವ ರೀತಿ ಇದೆಯಲ್ಲ ಅದು ನನ್ನನ್ನು ತಟ್ಟುತ್ತದೆ. ಕಿವಿ ಗುಳು ಗಳು ಅನ್ನುವಾಗ ಇಯರ್ ಬಡ್ ಹಾಕಿಕೊಂಡು ಗಲಗಲ ಮಾಡಿ ಪ್ರಪಂಚವನ್ನೇ ಒಂದು ಕ್ಷಣ ಮರೆತಂತೆ, ಕೈಗೆ ತಾಗದ ಬೆನ್ನಿಗೆ ತುರಿಕೆಯಿದಾಗ ಹಣಿಗೆಯೊಂದರಿಂದ ಅದನ್ನು ಕೆರೆದುಕೊಂಡಾಗ ಸಿಗುವ ಸುಖದಂತೆ, ಗಂಟಲಲ್ಲೇ ಅಡಗಿ ಕಾಡಿಸಿದ ಶೀನೊಂದು ‘ಆಕ್ಶೀ’ ಎಂದು ಪಟ್ಟನೇ ಹೊರಬಂದಾಗ ಸಿಗುವ ಸಮಾಧಾನದಂತೆ, ಒತ್ತಿ ಬರುತ್ತಿರುವ ತೂಕಡಿಕೆಗೊಂದು ಹೆಗಲು ದೊರೆತಾಗಿನ ನೆಮ್ಮದಿಯಂತೆ ಈ ಜಾಹೀರಾತುಗಳೂ ಕೂಡ ನಂಗ ಏನೋ ಒಂಥರಾ ಅನಿರ್ವಚನೀಯ ಅಂತಾರಲ್ಲ ಅಂಥ ಖುಷಿ, ಭರವಸೆ, ನೆಮ್ಮದಿ, ಉತ್ಸಾಹಗಳನ್ನು ಕೊಡತಾವ.

ಇದನ್ನೋದಿ ಒಂದೆರಡು ನಿಮ್ಮ ಫೇವರಿಟ್ ಜಾಹೀರಾತು ನಿಮಗ ನೆನಪಾದ್ರ, ಮನಸ್ಸು ಜರ್ ಅಂತ ಹಿಂಬರಿಕಿ ಜಾರಿಹೋದ್ರ ಅದನ್ನ ನಂಗೂ ಹೇಳೂದ ಮರೀಬ್ಯಾಡ್ರಿ.

~ ಗೌರಿಪ್ರಸನ್ನ