ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು

ಅನಿವಾಸಿ ಬಂಧುಗಳಿಗೆ ನಮಸ್ಕಾರ. ಎರಡು ವಾರದಿಂದ ಭಾರತ  ಪ್ರವಾಸದಲ್ಲಿದ್ದೇನೆ. ಗೃಹಪ್ರವೇಶ, ಮದುವೆ ಸಮಾರಂಭಗಳನ್ನು ಅಟೆಂಡ್ ಮಾಡುತ್ತ, ಬಂಧು ಬಳಗ, ಸ್ನೇಹಿತರನ್ನು ಭೇಟಿಯಾಗುತ್ತ  ದೆಹಲಿ, ಮುಂಬಯಿ, ಪುಣೆ, ಧಾರವಾಡ ಎಂದೆಲ್ಲ ಸುತ್ತಾಡುತ್ತ ,  ದೆಹಲಿಯ ಚಳಿಗಾಲ  ಕಳೆದು  ಈಗಷ್ಟೇ ಆರಂಭವಾಗುತ್ತಿರುವ  ಎಳೆಯ ಬಿಸಿಲನ್ನೂ, ಮುಂಬಯಿಯ  ಆ humid ಶೆಕೆಯನ್ನೂ, ಪುಣೆಯ ಸಂಜೆ ಮುಂಜಾನೆಗಳ ಆಹ್ಲಾದಕರ ತಂಪು ಹವೆಯನ್ನೂ , ಧಾರವಾಡದ  ಬಿಸಿಲು ಮಳೆಗಳ  ಸಮ್ಮಿಶ್ರ ಹವಾಮಾನವನ್ನೂ, ಲಿಠ್ಠಿ ಛೌಕಾ, ದಾಲ್ ಮುರಾದಾಬಾದಿ, ಮಿಸಳ್ ಪಾವ್, ಭಾಕರ್ ವಡಿ, ಶ್ರೀಖಂಡ, ಗಿರಮಿಟ್, ಫೇಡೆಗಳನ್ನೂ  ಸಮಸಮವಾಗಿ ಆಸ್ವಾದಿಸುತ್ತ  ಜೊತೆಗೇ ಒಂದಷ್ಟು ನೆಗಡಿ, ಕೆಮ್ಮು ಎಂದು ಆರೋಗ್ಯ ಕೆಡಿಸಿಕೊಂಡು ಔಷಧಿ, ಗಳಿಗೆಯನ್ನೂ ಸೇವಿಸುತ್ತ ರಜಾದ ಮಜಾ ಸವಿಯುತ್ತಿದ್ದೇವೆ. ಹೀಗಾಗಿ ಈ ಸಲ ಅನಿವಾಸಿಯ ಓದಿಗೆ ಚಿಕ್ಕದಾದೊಂದು ವಸ್ತುವಿನ ಬಗ್ಗೆ ಒಂದು ಚಿಕ್ಕ ಲೇಖನ. ಒಪ್ಪಿಸಿಕೊಳ್ಳಿ.

~ ಸಂಪಾದಕಿ

ಸೇಫ್ಟಿ ಪಿನ್

ಕೆಲ ದಿನಗಳ ಹಿಂದೆ ಜಯಂತ ಕಾಯ್ಕಿಣಿಯವರ ‘ಅನಾರ್ಕಲಿಯ ಸೇಫ್ಟಿ ಪಿನ್’ ಓದುತ್ತಿರುವಾಗ ಈ ಸೇಫ್ಟಿ ಪಿನ್ ಗೂ, ಆ ಅನಾರ್ಕಲಿಗೂ ಅದೇನು ಸಂಬಂಧವಿರಬಹುದು ಎಂಬ ಗೊಂದಲದ ಭಾವ  ನನ್ನನ್ನು ಕಾಡಿತ್ತು. ಆಮೇಲೆ ಹೊಳೆದ ಸತ್ಯವೇನೆಂದರೆ ಅನಾರ್ಕಲಿಯೋ, ಚಂಪಾಕಲಿಯೋ, ಚಮೇಲಿಯೋ ಯಾರೇ ಇರಲಿ ಸೇಫ್ಟಿ ಪಿನ್ ಮಾತ್ರ ಎಲ್ಲರಿಗೂ ಬೇಕೇ ಬೇಕು ಎಂಬುದು. ಈ ಸೇಫ್ಟಿ ಪಿನ್ ಗಳಿಗೂ  ಹೆಂಗಳೆಯರಿಗೂ ಬಿಡಿಸಲಾಗದ ನೆಂಟು. ಹೆಂಗಳೆಯರ ಸೀರೆ ಬ್ಲೌಜ್ ಗಳಿಗೂ ಈ ಪಿನ್ನು ಗಳಿಗಂತೂ ಅವಿನಾಭಾವ ಸಂಬಂಧ. ‘ವಾಗರ್ಥ ವಿವ ಸಂಪ್ರೃಕ್ತೌ ವಾಗರ್ಥ ಪ್ರತಿಪತ್ತಯೇ’ ಎಂದು ಕಾಳಿದಾಸ ಹೇಳಿದಂತೆ. 

ಸೀರೆಯ ಚಂದದ ಸೆರಗನ್ನು ನೀಟಾಗಿ ಹಿಡಿದಿಡಲು, ಸಡಿಲವಾದ ಬ್ಲೌಸ್ ಅನ್ನು ಫಿಟ್ ಮಾಡಲು, ಬಿಗಿಯಾದ ಬ್ಲೌಸಿನ ಒಳಮೈ ಯ್ಯ ಹೊಲಿಗೆ ಬಿಚ್ಚಲು ಸೀರೆಯ ನೆರಿಗೆಗಳನ್ನು ಒಪ್ಪವಾಗಿಸಲು ಈ ಪಿನ್ನು ಬೇಕೇ ಬೇಕು. ಬ್ಲೌಸುಗಳಂತೂ ಈ ಪಿನ್ನುಗಳ ಭರವಸೆಯ ಮೇಲೆಯೇ ಬದುಕುವುದು. ಏಕೆಂದರೆ ನೀವು ಎಷ್ಟರೇ ರೊಕ್ಕ ಸುರದು ಬೇಕಾದಂತಹ ಡಿಸೈನರ್ ಬೋಟಿಕ್ ನಾಗ ಹೊಲಿಸಿದ್ರೂ ಅವು ನಿಮ್ಮ ಮೈ ಏರುವಾಗ ಲೂಸೋ, ಬಿಗಿಯೋ, ತೋಳು ಇಳಿಯುವುದೋ ಏನೋ ಒಂದು ಆಗಲೇಬೇಕು. ನನಗಂತೂ ಒಮ್ಮೊಮ್ಮೆ ಡೌಟು..ಚಂದದ ಕಿಮ್ಮತ್ತಿನ ಸೀರೆಗಳನ್ನು ದೌಲತ್ತಿನಿಂದ ಉಟ್ಟು ದಿಮಾಕಿನಿಂದ ನಡೆವ ಲಲನಾಮಣಿಯರನ್ನು ಕಂಡು ಹೊಟ್ಟೆ ಉರಿದವರ್ಯಾರದೋ ಕೆಟ್ಟ ದೃಷ್ಟಿತಾಗಿಯೋ,ಶಾಪ ತಟ್ಟಿಯೋ ಈ ಬ್ಲೌಸ್ ಗಳು ಹಾಳಾಗಬಹುದೆಂದು. ಅಂಥ ಸಮಯದಲ್ಲಿ ಶಾಪ ವಿಮೋಚಕನಾಗಿ ನಮಗೆ ನೆರವಾಗುವುದು ಇದೇ ಸೇಫ್ಟಿ ಪಿನ್ನು.

ಈ ಪಿನ್ನಿನ ಋಣ ಭಾರವಿಲ್ಲದ ಹೆಂಗಳೆಯರೇ ಇಲ್ಲ. ಸಾಲ ಸೋಲ ಎಂದರಾಗದ ನಿಯತ್ತಿನ ಜೀವಗಳನ್ನೂ ಇವು ಕಾಡದೇ ಬಿಡುವುದಿಲ್ಲ. ಎಷ್ಟರೇ ಡಜನ್ಗಟ್ಟಲೆ ಪಿನ್ನು ಖರೀದಿ ಮಾಡಿಟ್ಟಿರಿ ಬೇಕಾದ ಸಮಯಕ್ಕೆ ಸಿಗದೇ ಪಕ್ಕದಲ್ಲಿದ್ದ ಅಕ್ಕನೋ, ಅತ್ತಿಗೆಯೋ, ಅಮ್ಮನೋ, ಗೆಳತಿಯೋ ಯಾರ ಬಳಿಯಲ್ಲಾದರೂ ‘ಒಂದು ಪಿನ್ ಇದ್ರೆ ಕೊಡ’ ಎಂದು ನೀವು ಒಮ್ಮಿಲ್ಲ ಒಮ್ಮೆ ಕೇಳೇ ಕೇಳಿರುತ್ತೀರಿ. ಆ ಪಿನ್ನಿನ ಋಣದಲ್ಲಿ ಬಿದ್ದೇ ಇರುತ್ತೀರಿ. ನಿಮಗೆ ಅತಿ ಅವಶ್ಯಕತೆ ಇದ್ದಾಗ, ಬೇಕೆಂದಾಗ ಆ ಪಿನ್ನುಗಳು ನಿಮಗೆ ಸಿಕ್ಕದಿರಲಿ ಎಂದು ಅದ್ಯಾವ ಪರಶುರಾಮ ಶಾಪ ಕೊಟ್ಟನೋ ಕಾಣೆ ಬೇಕೆಂದಾಗ ಡ್ರಾತೆಗೆದು, ಡಬ್ಬಿ ತೆಗೆದು, ಪರ್ಸ್ ತಡಕಾಡಿ ಡ್ರೆಸ್ಸಿಂಗ್ ಟೇಬಲ್ ಜಾಲಾಡಿದರೂ ಅವು ಕಾಣದಂತೆ ಅದೃಶ್ಯವಾಗಿ ಬಿಟ್ಟಿರುತ್ತವೆ. ಎಲ್ಲಿಟ್ಟಿರುವೆವೆಂಬ ನೆನಪು ಬಾರದೆ ನಾವೂ ಸಹ ಆ ಮಹಾಭಾರತದ ಕರ್ಣನಂತೆ ಒದ್ದಾಡುತ್ತಿರುತ್ತೇವೆ.

ಸ್ತ್ರೀಯರ ವ್ಯಾನಿಟಿ ಬ್ಯಾಗ್ ಅಂದ್ರೆ ಅದರಲ್ಲಿ ಏನೇ ಇರಲಿ ಬಿಡಲಿ ಈ ನಾಲ್ಕಾರು ಪಿನ್ನುಗಳಂತೂ ಇರಲೇಬೇಕು. ಒಮ್ಮೆ ನಾನು ದೆಹಲಿಯಿಂದ ಹುಬ್ಬಳ್ಳಿಗೆ ಹೊರಟಿದ್ದೆ. ಸೆಕ್ಯೂರಿಟಿ ಚೆಕ್ ನಲ್ಲಿ ನನ್ನ ವ್ಯಾನಿಟಿ ಬ್ಯಾಗ್ ತನ್ನ ನೇರ ರಸ್ತೆ ಬಿಟ್ಟು ಪಕ್ಕಕ್ಕೆ ಹೊರಳಿ ಅಲ್ಲಿದ್ದ ಅಧಿಕಾರಿಗಳ ಕೈಗೆ ಸಿಕ್ಕಿ ಬಿಟ್ಟಿತು. ಹತ್ತತ್ತು ಸಲ ಚೆಕ್ ಮಾಡಿದರೂ ಏನೂ ಸಿಗುತ್ತಿಲ್ಲವಾದರೂ ಸ್ಕ್ಯಾನ್ ನಲ್ಲಿ ಏನೋ ಇದೆಯೆಂದು ತೋರಿಸುತ್ತಿದೆ. ಅಲ್ಲಿನ ಅಧಿಕಾರಿಗಳು ನನ್ನನ್ನು ನೋಡುವ ರೀತಿಗೆ ‘ ಅಯ್ಯಾ, ನನ್ನ ಈ ಬ್ಯಾಗನ್ನು ನೀನೇ ಇಟ್ಟುಕೊಂಡುಬಿಡು’ ಎಂದು ಹೇಳಬೇಕೆನಿಸಿಬಿಟ್ಟಿತು.ಮುಂದೆ ಒಂದು ದಿನ ಅವತ್ತು ಅವರ ಕೈಗೆ ಸಿಗದ ಈ ಪಿನ್ನಿನ ಗೊಂಚಲು ಅಚಾನಕ್ಕಾಗಿ ನನಗೆ ಸಿಕ್ಕಿತ್ತು. ಬ್ಯಾಗಿನ ಒಳಭಾಗದ zip ನ ಬಟ್ಟೆಗೊಂದು ಸಣ್ಣ ತೂತಾಗಿ ಆ ಕಿಂಡಿಯಿಂದ ಹೈದರಾಲಿಯ ಸೈನಿಕನಂತೆ ನುಸುಳಿ ಅವಿತುಕೊಂಡಿದ್ದ ಆ ಪಿನ್ನಿನ ಗೊಂಚಲು ಅಂತೂ ಸೆಕ್ಯೂರಿಟಿಯ ಓಬವ್ವನ ಕೈಗೆ ಸಿಗದೆ ತಪ್ಪಿಸಿಕೊಂಡು ಹೊರಬಂದಿತ್ತು.

ಫ್ಲೈಟ್ ನಲ್ಲಿ ಕೊಡುವ ಈ ಸ್ನಾಕ್ಸ್ ಪ್ಯಾಕೆಟ್ ಹರಿಯಲು, ಕಿವಿ ಗುಳುಗುಳು ಎಂದರೆ ಇಯರ್ ಬಡ್ ನಂತೆ ಕೆಲಸ ಮಾಡಲು, ಹಲ್ಲು ಸಂದಿಯಲ್ಲಿ ಸಿಕ್ಕಿದ ಬೇಳೆಕಾಳು ಸೊಪ್ಪನ್ನು ತೆಗೆಯಲು ಟೂತ್ ಪಿಕ್ ನಂತೆಯೂ ಹಲವಾರು ರೀತಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತದೆ ಈ ಸೇಫ್ಟಿ ಪಿನ್. ಕಾಲಿಗೆ ನೆಟ್ಟ ಮುಳ್ಳು ತೆಗೆಯಲು, ಉಗುರು ಸಂದಿಯಲ್ಲಿ ಅವಿತ ಕೊಳಕು ತೆಗೆಯಲು, ಹಣಿಗೆಯ ಹಲ್ಲುಗಳನ್ನು ಸ್ವಚ್ಛಗೊಳಿಸಲು ಈ ಪಿನ್ನು ಬೇಕೇ ಬೇಕು . ನಿಮ್ಮ ಪ್ರೆಷರ್ ಕುಕ್ಕರ್ ಸೀಟಿಯಲ್ಲಿ ಸಿಕ್ಕಿಕೊಂಡ ಅನ್ನದ ಅಗುಳಿನ ತುಂಡನ್ನೋ, ಬೆಂದ ಬೇಳೆಯನ್ನೋ ತೆಗೆಯಲು ಇದು ಬೇಕೇ ಬೇಕು . ಕೆಲವೊಮ್ಮೆ ಹರಿದ ಚಪ್ಪಲಿಗೂ ಇದರ ನೆರವು ಬೇಕಾಗುತ್ತದೆ.

ಮನೆಯ ಅಂಗಳದಲ್ಲಿ ಅರಳುತ್ತಿದ್ದ ನಾಲ್ಕಾರು ದುಂಡು ಮಲ್ಲಿಗೆಯನ್ನು ಒಂದು ಪಿನ್ನಿನಲ್ಲಿ ವೃತ್ತಾಕಾರವಾಗಿ ಚುಚ್ಚಿ ಮುಡಿಗೇರಿಸಿಕೊಂಡು ಡೌಲು ಬಡಿಯುತ್ತಿದ್ದ, ಆ ಮಲ್ಲಿಗೆಯ ಘಮದಲ್ಲಿ ತೇಲಿ ಹೋಗುತ್ತಿದ್ದ ಬಾಲ್ಯದ ದಿನಗಳು ಈಗಲೂ ಮೆರವಣಿಗೆ ಹೊರಡುತ್ತವೆ. ಹೆರಳ ತೊಡಕು ಬಿಡಿಸುವಾಗ ಉದುರಿದ ಕೂದಲನ್ನು ಕೂಡಿಟ್ಟು ಆ ಕೂದಲ ಬದಲಿಗೆ ಈ ಪಿನ್ನುಗಳನ್ನು ಖರೀದಿಸುತ್ತಿದ್ದ ನನ್ನ ಬಾಲ್ಯಕಾಲದ ಹಳ್ಳಿಯ ಜೀವನ ಈಗಲೂ ಗುಂಗಾಗಿ ಕಾಡುತ್ತದೆ.

ಹಂಗಂತ ಈ ಸೇಫ್ಟಿ ಪಿನ್ ಗಳು ಬಹಳ ಸಾಚಾ ಅಂತನೂ ತಿಳ್ಕೋಬ್ಯಾಡ್ರಿ. ಇವುಗಳು ಮಾಡೋ ಅವಾಂತರ ನಮಗೆ ಅಂದರೆ ಹೆಂಗಳೆಯರಿಗೇ ಗೊತ್ತು. ಬೆಲೆ ಬಾಳುವ ಚಂದನೆಯ ರೇಷ್ಮೆ ಸೀರೆ, ಬ್ಲೌಜ್ ಗಳಿಗೆ ಕೆಲವೊಮ್ಮೆ ನಿರ್ದಯವಾಗಿ ತೂತು ಬೀಳಿಸಿ ಬಿಡುತ್ತವೆ. ದೊಡ್ಡ ಪಿನ್ನು ಮೊಂಡಹಡಿ ಇದ್ದು ಸೀರೆಗೆ ಚುಚ್ಚದೆ ಕೈ ನೋವು ಬರಿಸಿದರೆ ಗಿಡ್ಡ ಮೆಣಸಿನಕಾಯಿ ಅಂತಹ ಮರಿ ಪಿನ್ನು ಕಚಕ್ ನೇ ಚುಚ್ಚಿ ‘ಆ’ ಎನ್ನುವಂತೆ ಮಾಡುತ್ತದೆ. ಹೀಗಾಗಿ ನೀವು ಬೇರೆ ಯಾರದೋ ಸೀರೆಯನ್ನ ಏನಾದರೂ ಕಡ ತೆಗೆದುಕೊಂಡು ಉಡುತ್ತಿದ್ದರೆ ಬಹಳ ಹುಷಾರಾಗಿರಬೇಕಾಗುತ್ತದೆ.

ಬಹು ಉಪಯೋಗಿ ಈ ಪಿನ್ನುಗಳು ನಿಮಗೆ ಜನರನ್ನು ಯಾವ ಪ್ರಾಂತ್ಯದವರೆಂದು ಗುರುತಿಸಲು ಸಹ ನೆರವು ನೀಡುತ್ತವೆ. ಅದ್ಹೆಂಗ ಅಂತ ಹುಬ್ಬೇರಿಸಬ್ಯಾಡ್ರಿ. ಉದಾಹರಣೆ ಸಮೇತ ಹೇಳತೀನಿ ನೋಡ್ರಿ . ಒಮ್ಮೆ ದೆಹಲಿಯಲ್ಲಿ ಅಕ್ಷರಧಾಮಕ್ಕೆ ಹೋಗಿದ್ವಿ ಅಲ್ಲಿ ಪಾಳಿಯೊಳಗೆ ಇಬ್ಬರು ಮಧ್ಯವಯಸ್ಕ ಗಂಡ ಹೆಂಡತಿ ನಿಂತಿದ್ದರು. ನಾನು ನನ್ನ ಮಗನಿಗೆ ಅವರನ್ನು ಮಾತನಾಡಿಸಿ ಬರುವೆ, ಅವರು ಪಕ್ಕಾ ನಮ್ಮ ಕಡೆಯವರೇ ( ಉತ್ತರ ಕರ್ನಾಟಕ) ಇರುತ್ತಾರೆ ಅಂದೆ. ಅವನು ‘ಅದ್ಹೆಂಗ ಹೇಳತಿ’ಎಂದು ಸವಾಲೆಸೆದ. ಹೋಗಿ ಮಾತನಾಡಿಸಿದರೆ ಅವರು ಗುಲ್ಬರ್ಗದವರಿದ್ದರು. ಆ ಹೆಣ್ಣು ಮಗಳ ಕೈಯ ಕಾಜಿನ ಬಳೆ, ಪಾಟಲಿ, ಬಿಲವಾರದಲ್ಲಿ ಜೋತಾಡುತ್ತಿದ್ದ ಒಂದು ಹಳದಿ ಮರಿ ಪಿನ್ನು, ಒಂದು ಸ್ಟೀಲಿನ ದೊಡ್ಡ ಪಿನ್ನು ನೋಡಿಯೇ ನಾನು ಗುರುತು ಹಿಡಿದಿದ್ದು. ಈಗಲೂ ನಮ್ಮಮ್ಮ, ಅತ್ತೆಯರು ಪಿನ್ ಕೇಳಿದರೆ ತಕ್ಷಣ ಬಳೆ, ಮಂಗಳ ಸೂತ್ರದಿಂದ ತೆಗೆದುಕೊಡುತ್ತಾರೆ. ಮಂಗಳಸೂತ್ರ ಬಳೆ ಇರುವುದೇ ಈ ಪಿನ್ನುಗಳನ್ನು ಕಾಪಿಟ್ಟುಕೊಳ್ಳಲೇನು ಎಂಬ ಸಂಶಯ ನನ್ನನ್ನು ಕಾಡುತ್ತದೆ. ಒಮ್ಮೊಮ್ಮೆ ಈ ಶಿರಸಿ, ಮೈಸೂರು, ಬೆಂಗಳೂರು, ಮಂಗಳೂರಿನ ಹೆಂಗಳೆಯರ ಬಗ್ಗೆ ನನಗೆ ಗೊತ್ತಿಲ್ಲ ಆದರೆ ನಮ್ಮ ಕಡೆ ಹೆಣ್ಣು ಮಕ್ಕಳ ಕೈಯಲ್ಲಿ ಕೊರಳಲ್ಲಿ ಇವು ಇರಲೇಬೇಕು.. ಇರತಾವ ಕಾಸಿನ ಕಿಮ್ಮತ್ತಿನ ಈ ಪಿನ್ ಮಹಾಶಯ ಬಂಗಾರದ ಬಳೆ, ಸರಗಳಲ್ಲಿ ಮೆರೆಯುತ್ತಿರುತ್ತಾನೆ. ‘ ನಸೀಬ್ ಅಪನಾ ಅಪನಾ’ ಅನ್ನೋದು ಸುಳ್ಳಲ್ಲ ನೋಡ್ರಿ.

ಪಿಂಡಾಂಡದಲ್ಲಿ ಬ್ರಹ್ಮಾಂಡ ಎನ್ನುವ ತತ್ವ ಇವುಗಳನ್ನು ನೋಡಿಯೇ ಬಂದಿರಬೇಕು. ಆತ್ಮ ಸಂಗಾತಿಗಳು ಇವು. ಮಾನ ಕಾಯುವ, ಕಾಪಿಡುವ ಭಗವಂತನಿದ್ದಂತೆ ಗೀತೆಯ ವಿಭೂತಿ ಯೋಗದಲ್ಲಿ ಶ್ರೀ ಕೃಷ್ಣ ಹೇಳುತ್ತಾನಲ್ಲವೇ? “ನಾನು ನದಿಗಳಲ್ಲಿ ಗಂಗೆ, ಪರ್ವತಗಳಲ್ಲಿ ಮೇರು, ಯೋಧರಲ್ಲಿ ರಾಮ, ಸರ್ಪಗಳಲ್ಲಿ ಅನಂತ” ಅಂತೆಲ್ಲ.. ಈ ಪಿನ್ನುಗಳನ್ನು ಕಂಡಿದ್ದರೆ ಪಿನ್ನುಗಳಲ್ಲಿ ನಾನು ಸೇಫ್ಟಿ ಪಿನ್ನು ಎಂದು ಖಂಡಿತ ಹೇಳಿರುತ್ತಿದ್ದ.( ಸೂಜಿ, ಗುಂಡು ಸೂಜಿ, ಗುಂಡು ಪಿನ್ನು, ಪೇಪರ್ ಪಿನ್ನು, ಹೇರ್ ಪಿನ್ನು, ಸಾಡಿ ಪಿನ್ನು ಇತ್ಯಾದಿಗಳಲ್ಲಿ ).
ಹೀಗೆ ಆಪತ್ಕಾಲೀನ ಸಮಯದಲ್ಲಿ ಆಪದ್ಬಾಂಧವನಂತೆ ಕಣ್ಣಿಗೆ ಕಾಣದೆ ಒಳಗೆ ಸೇರಿಕೊಂಡು ಅದೃಶ್ಯವಾಗಿ ಈ ಸೇಫ್ಟಿ ಪಿನ್ನುಗಳು ಮಾನ ಕಾಯ್ದರೆ ಇದೇ ಕುಲದ ಸಾಡಿ ಪಿನ್ನುಗಳು ಎಲ್ಲರಿಗೂ ಕಂಡು ಸೀರೆಯ, ಸೀರೆಯುಟ್ಟ ನೀರೆಯ ಸೊಬಗು ಹೆಚ್ಚಿಸುತ್ತವೆ. ನವಿಲಿನಂಥ, ಹೂವಿನಂಥ, ಎಲೆ ಬಳ್ಳಿಯಂಥ, ಮುತ್ತಿನ ನತ್ತಿನಂತ ತರಾವರಿ ಸಾಡಿಪಿನ್ನುಗಳು ಮಾರ್ಕೆಟ್ನಲ್ಲಿ ಲಭ್ಯ.

1849ರಲ್ಲಿ ಅಮೆರಿಕನ್ ಮೆಕ್ಯಾನಿಕ್ ವಾಟರ್ ಹಂಟ್ ತನ್ನ ಹೆಂಡತಿಯ ಉಡುಪಿನ ಗುಂಡಿ ಕಿತ್ತು ಹೋದಾಗ ತಕ್ಷಣಕ್ಕೆ ಉಪಯೋಗವಾಗಲಿ ಎಂದು ಇದನ್ನು ಕಂಡುಹಿಡಿದನಂತೆ. ‘ಅವನ ಹೆಂಡತಿ ಸಂತತಿ ಸಾವಿರವಾಗಲಿ’. ಅವಳ ಗುಂಡಿ ಅಂದು ಕಿತ್ತಿರದಿದ್ದರೆ ಈ ಪಿನ್ನು ಸಿಕ್ಕುತ್ತಲೇ ಇರಲಿಲ್ಲ. ಹೆಗ್ಗಳಿಕೆ ಎಂದರೆ ಅಂದಿನಿಂದ ಇಂದಿನವರೆಗೂ ಅದರ ಗಾತ್ರ ವಿನ್ಯಾಸಗಳಲ್ಲಿ ಬಹುಶ: ದರದಲ್ಲಿಯೂ ಅಂಥದೇನೂ ವಿಶೇಷ ಬದಲಾವಣೆ ಆಗಿಲ್ಲ.
ಒಂಥರ ದೇಶಕಾಲಾದಿಗಳಿಗೆ ಸಿಕ್ಕಿಯೂ ಬದಲಾಗದಂತಹ ಸಂತ ಮಹಾಂತರ ಗುಣವಿದಕ್ಕೆ. ಇದರ ಮೂರ್ತಿ ಚಿಕ್ಕದಾದರೂ ಕೀರ್ತಿ ಬಲು ದೊಡ್ಡದು. ಅಂತಹ ಸೇಫ್ಟಿ ಪಿನ್ ಗೆ ಹೃದಯಾಳದ ನನ್ನಿಗಳು.

~ ಗೌರಿಪ್ರಸನ್ನ

ತಾಳೆಗರಿಗಳಲ್ಲಿ ಹುದುಗಿದ ಇತಿಹಾಸ– ಶಾಲಿನಿ ಜ್ಞಾನಸುಬ್ರಹ್ಮಣಿಯನ್ ಲೇಖನ


ಜಗತಃ ಪಿತರೌ ವಂದೇ ಪಾರ್ವತೀಪರಮೇಶ್ವರೌ- ಕಾಳಿದಾಸ ರಘುವಂಶದಲ್ಲಿ.
(ಜಗತ್ತಿನ ತಂದೆ ತಾಯಿಯರಾದ ಪಾರ್ವತಿ ಪರಮೇಶ್ವರರ ಕೃಪೆ ನಮ್ಮೆಲ್ಲರ ಮೇಲಿರಲಿ.)
ಸಂಸ್ಕೃತ ಅಂದ ಕೂಡಲೇ ಕೆಲವರು ಅದು ಇನ್ನೂ ಪ್ರಸ್ತುತವೆ?ಸಂಸ್ಕೃತವನ್ನು ಯಾಕೆ ಕಲಿಯಬೇಕು ಎನ್ನುವ ಚರ್ಚೆಗೆ ಶುರು ಮಾಡಿಬಿಡುತ್ತಾರೆ. ಆದರೆ ಶಾಲಿನಿಯವರ ಈ ಲೇಖನದಲ್ಲಿ ತಾವು ಕಂಡ ಸಂಸ್ಕೃತ ವಿಶ್ವವಿದ್ಯಾಲಯದ ಹಸ್ತಪ್ರತಿ ಎನ್ನಿಸಿಕೊಳ್ಳುವ ತಾಳೆಗರಿ ಸಂಗ್ರಹವನ್ನು ಕಂಡು ಪುಳಕಿತರಾದ ಆ ಅನುಭವವನ್ನು ವರ್ಣಿಸುತ್ತಿದ್ದಾರೆ.
ಅಲ್ಲಿಂದ ಮರಳಿ ಬಂದ ಕೂಡಲೇ ಒಂದು ಲೇಖನವನ್ನು ಬರೆದು ಕೊಡಲೇ ಎಂದು ಕೇಳಿದರು. ಅವರಿಗೆ ಮೊದಲಿನಿಂದಲೂ ಸಂಸ್ಕೃತದ ಬಗ್ಗೆ ಒಂದು ತರಹ ಪ್ರೀತಿ ಮತ್ತು ಗೌರವ. ಇತ್ತೀಚಿಗೆ ಸಂಸ್ಕೃತ ಭಾರತಿ ಎನ್ನುವ ಸಂಘಟನೆ ಸಂಸ್ಕೃತ ಸಂಭಾಷಣೆಯ ಆನ್ ಲೈನ್ ವರ್ಗಗಳನ್ನು ಅನೇಕ ದೇಶಗಳಲ್ಲಿ ಪ್ರಾರಂಭ ಮಾಡಿದೆ. ಅದನ್ನು ಹುಟ್ಟು ಹಾಕಿದವರು ಕರ್ನಾಟಕದವರೇ ಆದ ಪದ್ಮಶ್ರೀ ಜನಾರ್ಧನ ಹೆಗಡೆ ಮತ್ತು ಚ. ಮು. ಕೃಷ್ಣ ಶಾಸ್ತ್ರಿಗಳು. ಅದರ ಹೆಡ್ ಕ್ವಾರ್ಟರ್ಸ್ ದೆಹಲಿಯಲ್ಲಿದೆ. ಕಳೆದ ಸುಮಾರು ಇಪ್ಪತ್ತು ವರ್ಷಗಳಿಂದ ಯು ಕೆ ದ ಸಂಸ್ಕೃತ ಭಾರತಿ ಅಂಗ ಸಂಭಾಷಣೆ ವರ್ಗವಲ್ಲದೆ ವರ್ಷಕ್ಕೆರಡು ಸಲ ನಾಲ್ಕು ಸಂಸ್ಕೃತ ತರಗತಿಗಳಿಗೆ ಪರೀಕ್ಷೆ ಸಹ ನಡೆಸುತ್ತಿದ್ದಾರೆ. ಉತ್ಸುಕರು ಅವರ ವೆಬ್ ಸೈಟ್ ಸಂಪರ್ಕಿಸ ಬಹುದು. ಸಂಸ್ಕೃತ ಸಂಭಾಷಣೆಗೆ ಒತ್ತು ಕೊಟ್ಟು ಸಂಸ್ಕೃತ ಶಿಬಿರವೊಂದನ್ನು ಪ್ರತಿವರ್ಷ ಏಪ್ರಿಲ್ ತಿಂಗಳಿನ ಆಸು ಪಾಸಿನ ಈಸ್ಟರ್ ರಜೆಯಲ್ಲಿ ಏರ್ಪಡಿಸುತ್ತಾರೆ. (ಈ ವರ್ಷ ಮೇ ತಿಂಗಳಲ್ಲಿ.) ಎರಡು ವರ್ಷಗಳ ಕೆಳಗೆ ಅಲ್ಲಿಯೇ ನನಗೆ ಭೇಟಿ ಮಾಡಿದ್ದರು. ಕಾರ್ಡಿಫ್ನಲ್ಲಿ ತಮ್ಮ ಪತಿ ಮತ್ತು ಒಬ್ಬಳೇ ಮಗಳೊಡನೆ ವಾಸ ಮಾಡುತ್ತಿದ್ದಾರೆ.
ಎಂದಿನಂತೆ ಓದಿ ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ. ಸಂಸ್ಕೃತ ಕಲಿಯಲು ಉತ್ಸುಕರಾಗಿದ್ದರೆ ಲೇಖನದ ಕೊನೆಗೆ ಕೊಟ್ಟ ಲಿಂಕ್ ಒತ್ತಿ ಯು ಕೆ ಸಂಸ್ಕೃತ ಭಾರತಿಗೆ ಸಂಪರ್ಕಿಸ ಬಹುದು. ಪರೀಕ್ಷೆಗಳಿಗೆ ಅಭ್ಯಾಸ ಮಾಡಲು ಪುಸ್ತಕಗಳನ್ನು ಸಹ ಕೊಳ್ಳ ಬಹುದು.(-ಸಂ)
ಬೆಂಗಳೂರಿನ ಚಾಮರಾಜಪೇಟೆಯ ಪಂಪಮಹಾಕವಿ ರಸ್ತೆಯ ಒಂದು ಕಡೆ ಕನ್ನಡ ಸಾಹಿತ್ಯ ಪರಿಷತ್ತು, ಅದರ ಎದುರು ಇರುವ ವಿಶಾಲವಾದ ಆವರಣ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ್ದು. ಎಂದಾದರೂ ಹೋಗೋಣವೆಂಬ ಕುತೂಹಲಕ್ಕೆ ಬೆಂಬಲ ನೀಡಿದಂತೆ ಇತ್ತೀಚಿಗೆ ಪ್ರಚಲಿತವಾದ ಹ್ಯಾಂಡ್ಸ ಆನ್ ಫೌಂಡೇಷನ್ರವರ ಸೋಶಿಯಲ್ ಮೀಡಿಯಾದಲ್ಲಾದ ವೈರಲ್ ವಿಡಿಯೋ. ಸರಿ, ನೋಡಲೇ ಬೇಕೆಂದು ನಿಶ್ಚಯಿಸಿ ಹೊರಟೆ ಹಸ್ತಪ್ರತಿ ಸಂಗ್ರಹಾಲಯದತ್ತ. ನನಗೆ ಸಂಸ್ಕೃತ ಕಲಿಯುವ ಆಸಕ್ತಿ ಮತ್ತು ಪ್ರೀತಿ ಶಾಲಾ ದಿನಗಳ ನಂತರ ಸ್ವಲ್ಪ ತಡವಾಗಿ ಆರಂಭವಾಯಿತು. ಶಾಲೆಯಲ್ಲಿ ಸಂಸ್ಕೃತವನ್ನು ಪ್ರಥಮ ಭಾಷೆಯಾಗಿ ತೆಗೆದುಕೊಳ್ಳದಿದ್ದುದರ ಪಶ್ಚಾತ್ತಾಪವನ್ನು ನಾನು ಇಂದಿಗೂ ಹೊಂದಿರುವೆ. ತದನಂತರ ಪಂಡಿತ ಸುಧಾಕರ ಚತುರ್ವೇದಿ ಮತ್ತು ಪಂಡಿತ ಸುಧಾಕರ ಶರ್ಮ ಅವರ ವೇದ ಪ್ರವಚನಗಳನ್ನು ಕೆಲ ವರ್ಷಗಳ ಹಿಂದೆ ಕೇಳುವ ಅವಕಾಶ ನನಗೆ ದೊರಕಿತ್ತು. ಸಂಸ್ಕೃತ ವ್ಯಾಕರಣ, ಧಾತುಗಳ ಕುರಿತು ಸಹ ಪಾರ್ಶ್ವವಾಗಿ ಚರ್ಚೆ ನಡೆಯುತ್ತಿತ್ತು. ಆದರೂ ಅನೇಕ  ವರ್ಷಗಳ ನಂತರವೂ, ನಾನು ಅದೇ ವಲಯದಲ್ಲಿ ಸುತ್ತುತ್ತಿರುವೆ ಅಂದುಕೊಳ್ಳುತ್ತೀನಿ.
ಇತ್ತೀಚೆಗೆ ನಾನು ಬೆಂಗಳೂರಿಗೆ ಹೋದಾಗ ಒಂದು ಸಂಜೆ ನಾನು ಅಲ್ಲಿ ತಲುಪುವಷ್ಟರಲ್ಲಿ ತಡವಾದರೂ ಸಹ ಕಾರ್ಯಾಲಯದಲ್ಲಿದ್ದ ಉನ್ನತ ಅಧಿಕಾರಿಯವರು ಮಂದಸ್ಮಿತರಾಗಿದ್ದರು. "ಮ್ಯೂಸಿಯಂ ಈಗ ತಾನೇ ಮುಚ್ಚಿದೆವು. ಪರವಾಗಿಲ್ಲಾ, ದೂರದಿಂದ ಬಂದಿದ್ದೀರಿ, ತೆರೆಯುತ್ತೇವೆ, ಹೋಗಿ ನೋಡಿಕೊಂಡು ಬನ್ನಿ" ಎಂದು ಸೌಹಾರ್ದತೆಯಿಂದ ಬರಮಾಡಿಕೊಂಡರು. ವಿಡಿಯೋದಲ್ಲಿ ಕಾಣಿಸಿಕೊಂಡಿದ್ದವರು ಇವರೇ ಎಂಬ ಅರಿವು ನನಗೆ ಒಂದೇ ಕ್ಷಣದಲ್ಲಿ ಉದಯಿಸಿತು- ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ರಾಮಕೃಷ್ಣ ಭಟ್ ಅವರು. ಸರಳವಾದ ವ್ಯಕ್ತಿತ್ವ, ಬಿಳಿ ಶರ್ಟ್ ಮತ್ತು ಧೋತಿ ಧರಿಸಿದ್ದ ಅವರನ್ನು ನೋಡುತ್ತಿದ್ದಂತೆ, ವಿದ್ಯೆಯನ್ನು ಧಾರೆ ಇರಿಸಲು ಸಿಧ್ಧರಾದ ಗುರುಗಳನ್ನು ಕಂಡಂತಾಯಿತು.




ಪ್ರಥಮ ಫೋಟೋ: ಬ್ರಾಹ್ಮಿ ಲಿಪಿಯ ರೂಪಾಂತರ 
ಕೊನೆಯ ಸಾಲಿನಲ್ಲಿ: ಪ್ರತಿ ಅಕ್ಷರಕ್ಕೊಬ್ಬ ದೇವತೆ