ಬುಲಂದ್ ಭಾರತ್ ಕಿ ಬುಲಂದ್ ತಸ್ವೀರ್

ಇತ್ತೀಚಿಗೆ ದೂರದರ್ಶನ ನೋಡುತ್ತಿರುವಾಗ, ನಡು ನಡುವೆ ಬರುವ ಜಾಹಿರಾತುಗಳನ್ನು ನೋಡುತ್ತಿದ್ದೆ. ಡೋಮಿನೋಸ್ ಜಾಹಿರಾತಿನಲ್ಲಿ ಸ್ನಾನ ಮಾಡುತ್ತಿರುವ ಟಬ್ನಲ್ಲಿ ಡೆಲಿವೆರಿಯವನು ಪ್ರತ್ಯಕ್ಷನಾಗಿ ಡೆಲಿವರಿ ಕೊಡುತ್ತಾನೆ, ಇನ್ನೊಂದು ಜಾಹಿರಾತಿನಲ್ಲಿ ನಮ್ಮ ಬಾಲಿವುಡ್ ನಟ ಬಚ್ಚಲು ತಿಕ್ಕಲು ಹಾರ್ಪಿಕ್ ಎಷ್ಟು ಉತ್ತಮ ಎಂದು ತೋರಿಸುತ್ತಾನೆ… ಹೀಗೇ ನೋಡುತ್ತಿದ್ದರೆ ನೀವು ಇನ್ನೂ ವಿಚಿತ್ರವಾದ ಇಂತಹ ಜಾಹಿರಾತು ನೋಡಬಹುದು.ಜಾಹೀರಾತು ಕೆಲವು ವಿಚಿತ್ರವಾದರೆ, ಇನ್ನೂ ಕೆಲವು ಮರೆಯದ ಸುಂದರ ಕಥೆ ತರಹ ಇರುತ್ತವೆ.

ಅಲಿಕ್ ಪದಂಸೀ, ಆರ್ ಬಾಲ್ಕಿ. ಪ್ರಹ್ಲಾದ್ ಕಕ್ಕರ್, ಗೌರಿ ಶಿಂಧೆ, ರಾಮ್ ಮಾಧ್ವಾನಿ ಇವರು ಜಾಹಿರಾತು ಜಗತ್ತಿನ ಕೆಲವು ಪ್ರಮುಖರು. ಸೃಜನಾತ್ಮಕ ಜಾಹಿರಾತು ಸೃಷ್ಟಿಸಿ ಮುಂದೆ ಒಳ್ಳೆಯ ಚಲನಚಿತ್ರಗಳನ್ನೂ ಕೂಡ ಮಾಡಿದ್ದಾರೆ. “ಜಾಹಿರಾತು” ಮತ್ತು “ಸಾಹಿತ್ಯ” ಇದರ ಒಂದು ಸಂಬಂಧ ಹೇಗೆ ಇರಬಹುದು.. ಇಂದಿನ ಲೇಖನ ಇದೆ ವಿಷಯದ ಬಗ್ಗೆ ಬರೆಯೋಣ ಅಂತ ವಿಚಾರ ಬಂತು…ಬರೆದಿದ್ದೇನೆ.

ಎಲ್ಲೆಲ್ಲೂ ಸಂಗೀತವೇ, ಎಲ್ಲೆಲ್ಲೂ ಸೌಂದರ್ಯವೇ
ಕೇಳುವ ಕಿವಿಯಿರಲು, ನೋಡುವ ಕಣ್ಣಿರಲು
ಎಲ್ಲೆಲ್ಲೂ ಸಂಗೀತವೇ…

ಮಲಯ ಮಾರುತದ ಚಿತ್ರದ ಹಾಡು, ಇದೆ ಹಾಡಿನ ಸಾಲುಗಳನ್ನು ಸ್ವಲ್ಪ ಬದಲಿಸಿದರೆ

ಎಲ್ಲೆಲ್ಲೂ ಸಾಹಿತ್ಯವೇ, ಎಲ್ಲೆಲ್ಲೂ ಮಾಹಿತಿಯೇ,
ಓದುವ ಕಣ್ಣಿರಲು, ಅರಿಯುವ ಮನವಿರಲು,
ಎಲ್ಲೆಲ್ಲೂ ಸಾಹಿತ್ಯವೇ…

ಜೀವನದಲ್ಲಿ ಪ್ರತಿ ಶಬ್ದ ಸಂಗೀತವಾದರೆ, ಪ್ರತಿ ಸಾಲು ಸಾಹಿತ್ಯ ಆಗಬಹುದು… ಅದು ಕೇಳುಗನ, ಓದುಗನ ಆಸಕ್ತಿ, ಅಭಿರುಚಿಯ ಅನುಗುಣವಾಗಿ ಅವಲಂಬಿತವಾಗಿದೆ.
ನಾವು ಚಿಕ್ಕವರಿದ್ದಾಗ ಚಲನಚಿತ್ರದ ನೋಡಲು ಚಿತ್ರಮಂದಿರಕ್ಕೆ ಹೋದಾಗ, ನಾವು ನೋಡಿದ
ಜಾಹಿರಾತಿನ ಸಾಲುಗಳಿಂದ ಈ ವಿಚಾರ ಆರಂಭಿಸೋಣ.

“ವಜ್ರದಂತಿ, ವಜ್ರದಂತಿ, ವಿಕೋ ವಜ್ರದಂತಿ,
ವಿಕೋ ಪೌಡರ್, ವಿಕೋ ಪೇಸ್ಟ್,
ಆಯುರ್ವೇದಿಕ್ ಜಡಿಬೂಟಿಯೊಂ ಸೆ ಬನಾ ಸಂಪೂರ್ಣ್ ಸ್ವದೇಶೀ,
ವಿಕೋ ಪೌಡರ್, ವಿಕೋ ಪೇಸ್ಟ್, ವಿಕೋ ವಜ್ರದಂತಿ!!!”

“ವಾಷಿಂಗ್ ಪೌಡರ್ ನಿರ್ಮಾ, ದೂಧ್ ಸಿ ಸಫೆದಿ
ನಿರ್ಮಾ ಸೆ ಆಯಿ, ರಂಗೀನ್ ಕಪಡಾ ಭೀ ಖಿಳ್ ಖಿಳ್ ಜಾಯೆ,
ಹೇಮಾ, ರೇಖಾ, ಜಯಾ ಔರ್ ಸುಷ್ಮಾ
ಸಬ್ಕಿ ಪಸಂದ್ ನಿರ್ಮಾ, ವಾಷಿಂಗ್ ಪೌಡರ್ ನಿರ್ಮಾ”

ಈ ಸಾಲುಗಳಲ್ಲಿ ಸಾಹಿತ್ಯ ಕಾಣಬಹುದೇ?
ಈ ಪ್ರಶ್ನೆಗೆ ಉತ್ತರಿಸಲು ಸಾಹಿತ್ಯ ಅಂದರೆ ಸರಳವಾದ ಉತ್ತರ ಏನು ಎಂದು ನೋಡೋಣ.

“Literature is a body of work that transmits culture “
ಅಥವಾ “Literature is the collective term for written works valued for their artistic or intellectual merit.”

ವಿಕೋ ವಜ್ರದಂತಿ ಸಾಲುಗಳನ್ನು ನೋಡಿದಾಗ “ಸಂಸ್ಕೃತಿ” ಪದದ ಬದಲಾಗಿ “ನಡೆದು ಕೊಂಡ ಬಂದ ಪದ್ಧತಿ” ಎಂದು ಓದಿದಾಗ ನಮಗೆ ಕಾಣಿಸುವುದು ಆ ಸಮಯದ ಆಯುರ್ವೇದ, ಗಿಡ ಮೂಲಿಕೆ ಉಪಯೋಗ. ನನಗೆ ಇನ್ನೂ ನೆನಪಿರುವುದು ಬೇವಿನ ಕಡ್ಡಿ ಉಪಯೋಗಿಸಿ ಹಲ್ಲುಜ್ಜುತ್ತಿದಿದ್ದು, ಅದರ ಖುಷಿಯೇ ಬೇರೆ. ಇನ್ನು “ಸ್ವದೇಶೀ” ಪದ ನೋಡಿದಾಗ ಅಂದಿನ ಸ್ಥಳೀಯ ಉತ್ಪನ್ನ ಉಳಿಸುವ, ಬೆಳೆಸುವ ಉದ್ದೇಶ. ನಮ್ಮ ದೇಶದ ಪರಂಪರೆಯಾದ ಆಯುರ್ವೇದ ವಿಜ್ಞಾನವನ್ನು ಶ್ರೀ ಜಿ ಕೆ ಪೆಂಡಾರ್ಕರ್ (ವಿಕೋ ಸಂಸ್ಥೆಯ ಸಂಸ್ಥಾಪಕ) ಅವರು ಉತ್ಸಾಹದಿಂದ ಸ್ವದೇಶೀ ಪ್ರಚಾರ ಇದರಲ್ಲಿ ಮಾಡಿದ್ದಾರೆ. ೧೯೬೦ ರ ಸುಮಾರು, ಭಾರತೀಯ ಕಂಪನಿಗಳು ವಿದೇಶಿ ತಂತ್ರಜ್ಞಾನಕ್ಕೆ ಮಾರುಹೋಗುತ್ತಿದ್ದಾಗ, ಶ್ರೀ ಪೆಂಡಾರ್ಕರ್ ಅವರು ಆಯುರ್ವೇದವನ್ನು ನಿರಂತರವಾಗಿ ಪ್ರಚಾರ ಮಾಡಿದರು.

ಇನ್ನು ನಿರ್ಮಾ, ಸಂಸ್ಥೆಯ ಸಂಸ್ಥಾಪಕನ ಮಗಳ ಕಥೆ ಎಂದು ಕೆಲವರಿಗೆ ಗೊತ್ತಿರಬಹುದು. ಕರ್ಸನ್ ಭಾಯ್ ಮಗಳು ನಿರುಪಮಾ, ಅವಳ ನೆನಪು ವರುಷ ವರುಷಗಳ ತನಕ ಇರಲೆಂದು ತಂದೆ ಮಗಳ ಪ್ರೀತಿಯ ಹೆಸರಾದ ನಿರ್ಮಾ ಸಂಸ್ಥೆ ಆರಂಭಿಸಿ, ಅದನ್ನು ಮನೆ ಮನೆಗೆ ತಲುಪಿಸಿದರು. ಇಲ್ಲಿ “ಹೇಮಾ, ರೇಖಾ, ಜಯಾ ಔರ್ ಸುಷ್ಮಾ” ಅಂದರೆ ಪ್ರತಿ ಹೆಣ್ಣು ಮೆಚ್ಚುವ, ಅವರ ಮನೆಯಲ್ಲಿ ಲಭ್ಯವಿರುವದು ನಿರ್ಮಾ ಎಂದು. ಇಲ್ಲಿಯೂ ಕೂಡ ಸುಂದರ ಮತ್ತು ಸರಳ ಪದಗಳ ಪದ್ಯ, “ನಿರ್ಮಾ” ಎಲ್ಲರ ಚಿರಪರಿಚಿತ ಹೆಸರಾಯಿತು.

ಇನ್ನು ಸರಳವಾಗಿ ಜಾಹೀರಾತು ವಿವರಿಸಿದರೆ “ಇದೊಂದು ಸಾಮಾನ್ಯವಾಗಿ ವಿಷಯ ತಿಳಿಯಪಡಿಸುವ ಒಂದು ಕ್ರಿಯೆ. ಇದು ಸಾರ್ವಜನಿಕರ ಗಮನಕ್ಕೆ ಮಾಡುವ ಒಂದು ಕರೆ, ಸಾಮೂಹಿಕ ಮನವಿ”. ಹಾಗಾದರೆ ಜಾಹಿರಾತು ಒಂದು ವಸ್ತು ಅಥವಾ ಉತ್ಪನ್ನ ಮಾರುವ ಒಂದು ಪ್ರಕ್ರಿಯೆ ಅಲ್ಲವೇ?
ಜಾಹೀರಾತುಗಳು, ಉತ್ಪನ್ನವನ್ನು ಮಾರಾಟ ಮಾಡುವ ಪ್ರಕ್ರಿಯೆಗೆ ಸೀಮಿತ ಅಲ್ಲ. ಅದರ ಮುಖ್ಯ ಉದ್ದೇಶ ಭಾವನೆಗಳನ್ನು ಹುಟ್ಟು ಹಾಕುವದು, ಮನವನ್ನು ಸಂತೋಷದಿಂದ ತುಂಬಿ,ನೆನಪುಗಳ ಆಗರದೆಡೆಗೆ ನಮ್ಮನ್ನು ಕರೆದುಕೊಂಡು ಹೋಗುವುದು…ಭಾವನಾತ್ಮಕ (emmotional) ಸೆಳೆತದಿಂದ ಉತ್ಪನ್ನ ಮತ್ತು ಅಪೇಕ್ಷಿತ (desire) ಭಾವನೆಯ ನಡುವೆ ಉಪಪ್ರಜ್ಞೆಯ (Subconscious) ಸಂಪರ್ಕವನ್ನು ಸೃಷ್ಟಿಸುವದು, ಅದನ್ನು ಹೆಚ್ಚು ಸ್ಮರಣೀಯ ಮತ್ತು ಅಪೇಕ್ಷಣೀಯವಾಗಿಸುವದು. ಅದು ಭಾವನೆಗಳು, ಸಾಮಾಜಿಕ ಸೂಚನೆಗಳು ಮತ್ತು ಅರಿವಿನ ಪೂರ್ವಾಗ್ರಹಗಳ ಮೇಲೆ ಕೇಂದ್ರೀಕರಿಸುತ್ತದೆ.

ಏ ಝಮೀನ್ ಏ ಆಸ್ಮಾನ್
ಹಮಾರಾ ಕಲ್ ಹಮಾರಾ ಆಜ್
ಬುಲಂದ್ ಭಾರತ್ ಕಿ ಬುಲಂದ್ ತಸ್ವೀರ್
ಹಮಾರಾ ಬಜಾಜ್

ಅಲಿಕ್ ಪದಂಸೀ ಅವರ ಬಜಾಜ್ ಜಾಹಿರಾತು ಮನೆ ಮನೆಯ ಹಾಡಾಯಿತು. ದ್ವಿಚಕ್ರ ವಾಹನ ಮಾರುಕಟ್ಟೆ ಅಂತರರಾಷ್ಟ್ರೀಯ ಮಾರಾಟಗಾರರಿಗೆ ತೆರೆದುಕೊಳ್ಳುತ್ತಿದ್ದಾಗ ಈ ಒಂದು ಜಾಹಿರಾತು ಬಜಾಜ್ ಸ್ಕೂಟರ್ ಹೊರತಂದಿತು. ಭಾರತದ ಈ ವಾಹನ ಸಾಮಾನ್ಯ ಜನರನ್ನು ಸಶಕ್ತರಾಗಿ ಮಾಡುತ್ತದೆ ಎಂದು ತೋರಿಸಲು ಅವರು ಇಲ್ಲಿ ಸಾಮಾನ್ಯ ಜನರನ್ನೇ ತೋರಿಸಿದರು…

ಫೆವಿಕಾಲ್, ಲಿಮ್ಕಾ, ಹ್ಯಾಪಿಡೆಂಟ್, ಕ್ಯಾಡ್ಬರಿ ಮುಂತಾದ ಇಂತಹ ಸುಂದರ ಜಾಹಿರಾತು ನೀವು ನೋಡಿರಬಹುದು. ಎಲ್ಲವನ್ನು ಒಂದೇ ಲೇಖನದಲ್ಲಿ ಬರೆಯಲಾಗುವುದಿಲ್ಲ… ಆದರೂ ನೋಡಿದ ಸುಂದರ, ಸಣ್ಣ ಕಥೆಯಂಥ ಒಂದೆರಡು ಹಂಚಿಕೊಳ್ಳುತ್ತಿದ್ದೇನೆ.

ನೀರು – ಅದರ ಮೂಲ ಅವಶ್ಯಕತೆ, ವಿವಿಧ ಜನರು ಅದನ್ನು ಉಪಯೋಗಿಸುವ ಪರಿ ತೋರಿಸಿದ ಒಂದು ಸುಂದರ ಚಿತ್ರ ಈ ಕೆಳಗಿನ ಜಾಹಿರಾತು

ಶಿಕ್ಷಕಿ ಮತ್ತು ವಿದ್ಯಾರ್ಥಿಗಳ ಸುಂದರ ಸಂಬಂಧ ಬಗ್ಗೆ ಪಾರ್ಲೆ ಜಿ ಅವರು ಸುಂದರ ಕಥೆ ಹೆಣೆದಿದ್ದಾರೆ.

ಎಲ್ಲರೂ ಒಂದೇ ಎಂದು ತೋರಿಸುವ ಈ ಕಿರುಚಿತ್ರ ಕಣ್ಣಂಚಲಿ ನೀರು ತಂದರೆ ಆಶ್ಚರ್ಯವಿಲ್ಲ

ಕೊನೆಯದಾಗಿ ನಾನು ಇಷ್ಟ ಪಟ್ಟ ಇನ್ನೊಂದು ಜಾಹಿರಾತು

ಜಾಲಿಯನ್‍ವಾಲಾ ಬಾಗ್ ನೆನಪುಗಳು, ಕೇಸರಿ-2 ಮತ್ತು ಸತ್ಯ-ಮಿಥ್ಯ -ಶಾಲಿನಿ ಜ್ಞಾನಸುಬ್ರಹ್ಮಣಿಯನ್ ಲೇಖನ

ಶಾಲಿನಿ ಜ್ಞಾನಸುಬ್ರಮಣಿಯನ್ ‘ಅನಿವಾಸಿ’ಗೆ ಹೊಸಬರು. ಅವರ ಪ್ರಥಮ ಲೇಖನವನ್ನು ಪ್ರಸ್ತುತ ಪಡಿಸುತ್ತಿದ್ದೇವೆ. ಅವರ ಸ್ವಪರಿಚಯ: “ನನ್ನ ಹುಟ್ಟೂರು ಬೆಂಗಳೂರು, ಓದಿದ್ದು ಬೆಳೆದಿದ್ದು ಎಲ್ಲಾ ಅಲ್ಲೇ. ಕಳೆದ ಇಪ್ಪತ್ತು ವರ್ಷಗಳಿಂದ ಯುಕೆ ನಲ್ಲಿ ಪರಿವಾರಸಹಿತವಾಗಿ ನೆಲೆಸಿರುವ ಕನ್ನಡತಿ. ಪ್ರಸ್ತುತ ನಾವು ಕಾರ್ಡಿಫ್ ನಲ್ಲಿ ನೆಲೆಸಿದ್ದೇವೆ. ವೃತ್ತಿಯಿಂದ ನಾನೊಬ್ಬ ಕಲಿಕೆ ಮತ್ತು ಅಭಿವೃದ್ಧಿ ತರಬೇತುದಾರಳು (Learning & development Trainer). ಶಾಸ್ತ್ರೀಯ ಸಂಗೀತದಲ್ಲಿ ನನಗೆ ತುಂಬಾ ಆಸಕ್ತಿ. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತವನ್ನು ಅಭ್ಯಾಸ ಮಾಡುತ್ತೇನೆ ಮತ್ತು ಹಾಡುತ್ತೇನೆ.”

ಚಿಕ್ಕಂದಿನಲ್ಲೇ ಜಾಲಿಯನ್ವಾಲಾ ಬಾಗ್ ಹತ್ಯಾಕಾಂಡದ ವಿವರಗಳು ಒಬ್ಬ ಪ್ರತ್ಯಕ್ಷದರ್ಶಿಯಿಂದ ಕೇಳಿ ಪ್ರಭಾವಿತರಾಗಿ ಕೆಲ ವರ್ಷಗಳ ಹಿಂದೆ ಸ್ವತಃ ತಮ್ಮ ಪರಿವಾರದೊಡನೆ ಹೋಗಿ ನೋಡಿಬಂದಿದ್ದಾರೆ. ಇತ್ತೀಚೆಗೆ ಯು ಕೆ ದಲ್ಲಿ ರಿಲೀಸಾದ ಚಿತ್ರ ”ಕೇಸರಿ – 2” ನೋಡಿದ ನಂತರ ಈ ಲೇಖನವನ್ನು ಬರೆದು ಕಳಿಸಿದ್ದಾರೆ. ಆ ಸಿನಿಮಾದ ಹಿನ್ನೆಲೆಯನ್ನರಿತವರಿಗೆ ಅಲ್ಲಿಯ ವಾಸ್ತವತೆ ಮತ್ತು ಅದರಲ್ಲಿಯ ಕಾಲ್ಪನಿಕ ಘಟನೆಗಳ ಬಗ್ಗೆ ಓದಿ ತಿಳಿದಿರ ಬಹುದು. ಇಲ್ಲಿ ಇನ್ನೊಂದು ಸ್ಪಷ್ಟೀಕರಣವೆಂದರೆ: ಬಹಳ ಜನರು ಜಾಲಿಯನ್ವಾಲಾ ಬಾಗ್ ನಲ್ಲಿ ಗೋಲೀಬಾರಿಗೆ ಆಜ್ಞೆ ಕೊಟ್ಟ ಕರ್ನಲ್ ( ಆಗ ತಾತ್ಕಾಲಿಕ ಬ್ರಿಗೇಡಿಯರ್ ಜನರಲ್ ಆಗಿದ್ದ) ರೆಜಿನಾಲ್ಡ್ ಡೈಯರ್ (Dyer) ಮತ್ತು ಆಗಿನ ಪಂಜಾಬ್ ಪ್ರಾಂತದ ಗವರ್ನರಾಗಿದ್ದವ ಮತ್ತು ರೆಜಿನಾಲ್ಡನ ಕುಕೃತ್ಯವನ್ನು ಸಮರ್ಥಿಸಿದ ಮೈಕೇಲ್ ಓ’ಡ್ವೈಯರ್ (O’Dwyer) ಹೆಸರುಗಳನ್ನು ಕನ್ಫ್ಯೂಸ್ ಮಾಡಿಕೊಳ್ಳುವ ಸಾಧ್ಯತೆಯಿದೆ.-ಸಂ)

ಜಾಲಿಯನ್‍ವಾಲಾ ಬಾಗ್ ನೆನಪುಗಳು -ಶಾಲಿನಿ ಅವರ ಲೇಖನ

ಕೆಲವೊಂದು ಚಲನ ಚಿತ್ರಗಳು ಹೀಗೂ ಇರುತ್ತವೆ. ಅದನ್ನು ನೋಡಿದಾಗ ನಮ್ಮೊಳಗಿನ ಭಾವನೆಗಳು ಹೊಮ್ಮುಕ್ಕುವುದಲ್ಲದೆ ನಮ್ಮನ್ನು ಸತ್ಯದೆಡೆಗೆ ಕರೆದೊಯ್ದು, ದೇಶಾಭಿಮಾನವನ್ನು ಕೆರಳಿಸಿ, ಪ್ರಜ್ವಲಿಸಿ ಭಾರತದ ಬಗ್ಗೆ ಹೆಮ್ಮೆಯಿಂದ ಎದೆಯುಬ್ಬಿಸುತ್ತದೆ. ನಿಮಗೂ ಒಮ್ಮೆಯಾದರೂ ಅಂಥ ಅಭಿಮಾನವುಂಟಾಗಿರಲು ಸಾಕು.
”Kesari 2: The untold story of Jallianwala Bagh” ಇಂತಹ ಒಂದು ಚಲನ ಚಿತ್ರ. ಅದನ್ನು ನೋಡುವಾಗ 1919 ರಲ್ಲಿ ಜಾಲಿಯನ್ವಾಲಾ ಬಾಗ್ದಲ್ಲಿ ನಡೆದ ಆ ಕರಾಳ ಘಟನೆಯನ್ನು ಹತ್ತಿರದಿಂದ ’ನೋಡಿ’ ಪ್ರಮಾಣಿಸಿ, ಪ್ರಶ್ನಿಸುವ, ಮತ್ತೊಮ್ಮೆ ಉದ್ವೇಗಿತರಾಗುವ ಅನುಭವ ನಮ್ಮದಾಗುತ್ತದೆ.
ಜಾಲಿಯನ್‍ವಾಲಾ ಬಾಗ್! ಈ ಶೀರ್ಷಿಕೆಯೇ ಸಾಕು, ಭಾರತದ ಸ್ವಾತಂತ್ರ್ಯ ಚಳುವಳಿಯ ಅತ್ಯಂತ ದುಃಖದ ಅಧ್ಯಾಯದ ಸ್ಮರಣೆಯನ್ನು ತಂದು ನಮಗೆಲ್ಲ ಭಾರತೀಯರಿಗೆ ವಿವಿಧ ಭಾವನೆಗಳನ್ನೆಬ್ಬಿಸುತ್ತದೆ. ನನಗೆ ಇದರೊಡನೆ ವೈಯಕ್ತಿಕ ಸಂಬಂಧವಿದೆ ಎಂದರೆ ಉತ್ಪ್ರೇಕ್ಷೆ ಅಲ್ಲ ಎಂದು ಭಾವಿಸುತ್ತೇನೆ. ಶಾಲೆಯಲ್ಲಿದ್ದಾಗ ಇತಿಹಾಸದ ಪುಟಗಳಲ್ಲಿ ಓದಿದ್ದು ಪ್ರಾಯಶಃ ದಾಖಲೆಯಾಗಿರಬಹುದೇನೋ, ಆದರೆ ಅದಕ್ಕಿಂತ ಹೆಚ್ಚಾಗಿ ಆ ಹತ್ಯಾಕಾಂಡವನ್ನು ಸ್ವತಃ ವೀಕ್ಷಿಸಿದವರ ವರ್ಣನೆಯನ್ನು ಅವರ ಬಾಯಿಂದಲೇ ಕೇಳಿದ್ದೆನಲ್ಲ ಅದರಿಂದಲೇ ಏನೋ! ಅದು ಹೇಗೆ, ಅಂತೀರೋ? ಮುಂದೆ ಓದಿ!

ಪಂಡಿತ್ ಸುಧಾಕರ ಚತುರ್ವೇದಿ (1897 - 2020)

ನನ್ನ ಹದಿಹರೆಯದ ವರ್ಷಗಳಲ್ಲಿ ನಮ್ಮ ತಾಯಿ ನಮ್ಮನ್ನು(ನನ್ನ ತಮ್ಮ ಮತ್ತು ನಾನು) ಹುರಿದುಂಬಿಸಿ ಪಂಡಿತ್ ಸುಧಾಕರ ಚತುರ್ವೇದಿ (20th April 1897-27th February 2020) ಯವರ ಸತ್ಸಂಗಗಳಿಗೆ ಕರೆದುಕೊಂಡು ಹೋಗುತ್ತಿದ್ದರು. ಅದು ನಮ್ಮ ಜೀವನದಲ್ಲಿ ಬಲವಾದ ಮೌಲ್ಯಗಳ ಅಡಿಪಾಯವನ್ನೇ ಹಾಕಿತ್ತು. ಕನ್ನಡಿಗರಾದ ಪಂಡಿತ್ ಜಿ ಅವರು ವೇದಪಾರಂಗತರು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಂಧಿತರಾಗಿ ಎರವಾಡ ಜೈಲಿನಲ್ಲಿದ್ದಾಗ 'ಜ್ಯೋತಿ ಸ್ವರೂಪ ಭಗವಾನ್, ಆ ದಿವ್ಯ ಜ್ಯೋತಿ ನೀಡು' ಎಂಬ ಕೃತಿಯನ್ನು ರಚಿಸಿದವರು. ಗಾಂಧೀಜಿಯವರ ಪತ್ರಗಳನ್ನು ರಹಸ್ಯವಾಗಿ ಒಂದೆಡೆಯಿಂದ ಇನ್ನೊಂದೆಡೆ ತಲುಪಿಸುತ್ತಿದ್ದರಿಂದ ಅವರನ್ನು ’ಗಾಂಧೀಜಿಯವರ Postman’ ಎಂದು ಕರೆಯುತ್ತಿದ್ದರು! ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ಗಾಂಧೀಜಿ ಅವರ ಮನವಿಯಂತೆ ಲಾಹೋರಿಗೆ ಭೇಟಿನೀಡಿದಾಗ, ಪಾಕಿಸ್ತಾನದಲ್ಲಿ ಅವರ ಮೇಲೆ ದಾಳಿಯಾಗಿ ಅವರನ್ನು ಕತ್ತಿನವರೆಗೆ ಮಣ್ಣಿನಲ್ಲಿ ಜೀವಂತ ಸಮಾಧಿ ಮಾಡಲಾಯಿತು. ಆದರೆ ಹೇಗೋ ಅಲ್ಲಿಗೆ ಬಂದ ಭಾರತೀಯ ಸೈನ್ಯ ಪಡೆಯವರು ಅವರನ್ನು ಪಾರುಮಾಡಿ ರಕ್ಷಿಸಿ ಮುಂದಿನ ರೈಲು ಗಾಡಿಯಲ್ಲಿ ವಾಪಸ್ ಕಳಿಸಿದರು! (ಇದನ್ನು ಶ್ರೀ ಶ್ರೀ ರವಿಶಂಕರವರ ವಿಡಿಯೋದಲ್ಲಿ ಕೇಳಬಹುದು). ಪ್ರತಿ ಶನಿವಾರದಂದು, ಬೆಂಗಳೂರಿನ ಅವರ ಮನೆಯಲ್ಲಿ ನಡೆಯುತ್ತಿದ್ದ ಸತ್ಸಂಗದಲ್ಲಿ, ವೇದಮಂತ್ರಗಳ ಉಪನ್ಯಾಸದ ಜೊತೆಗೆ ಪಂಡಿತ್ ಜಿ ಅವರು ತಮ್ಮ ಜೀವನದ ವಿವಿಧ ರೋಚಕ ಅನುಭವಗಳನ್ನೂ ನಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದರು.
13-4-1919 ರಂದು, ಅಂದರೆ ಇಂದಿಗೆ 106 ವರ್ಷಗಳ ಹಿಂದೆ ಜನರಲ್ ಡೈಯೆರ್ ನಡೆಸಿದ ಜಾಲಿಯಾನ್ ವಾಲಾ ಬಾಗ್ ಸಾಮೂಹಿಕ ಹತ್ಯೆಯನ್ನು ಪ್ರತ್ಯಕ್ಷವಾಗಿ ನೋಡಿ, ದೈಹಿಕ ಮತ್ತು ಮಾನಸಿಕ ನೋವುಂಡವರು ಆಗಿನ ತರುಣ ಪಂಡಿತ್ ಜಿ ಅವರು. ಆ ದಿನ ಸುತ್ತಲೂ ಬಂದೂಕಿನ ಸುರಿಮಳೆಯಾಗುತ್ತಿದ್ದಂತೆ ಒಂದು ಚರಂಡಿಯಲ್ಲಿ ಬಚ್ಚಿಟ್ಟುಕೊಂಡು ಪಾರಾದರು. ಈ ಹತ್ಯಾಕಾಂಡದ ನಂತರ ಅನೇಕರಿಗೆ ಅಂತ್ಯಕ್ರಿಯೆ ವಿಧಿಯನ್ನು ಸಹ ನಿರ್ವಹಿಸಿದ ಸ್ವಯಂಸೇವಕರು ಅವರು!
ಹಲವು ಬಾರಿ ಈ ಘಟನೆಗಳನ್ನು ಅವರ ಬಾಯಿಂದ ಕೇಳಿದ ನನಗೆ ಮನದಾಳದಲ್ಲೆದ್ದ ಭಾವನೆ: ಎಂದೂ ನಮ್ಮ ಇತಿಹಾಸವನ್ನು, ನಮ್ಮ ಸ್ವಾತಂತ್ರ್ಯ ಚಳುವಳಿಯ ಹೋರಾಟಗಾರರನ್ನು ಮರೆಯಬಾರದೆಂದು.
ಜಾಲಿಯನ್ವಾಲಾ ಬಾಗ್ ನಲ್ಲಿಗೋಡೇಗಳ ಮೇಲೆ ಬುಲೆಟ್ಟುಗಳ ಗುರುತು


ಇತ್ತೀಚೆಗೆ ನಾವು ಕಂಡ ಚಲನ ಚಿತ್ರ- ಕೇಸರಿ -2

ಎಪ್ರಿಲ್ ತಿಂಗಳಿನಲ್ಲಿ ವರ್ಷಾಬ್ದಿಯಂದು ರಿಲೀಸ್ ಆದ ಈ ಚಲನ ಚಿತ್ರದ ಅಧಿಕೃತ ಹೆಸರು Kesari Chapter 2: The Untold Story of Jallianwala Bagh. ನನ್ನ ಪತಿ ಸೇಕರ್ ಮತ್ತು ಮಗಳೊಂದಿಗೆ ಕಾರ್ಡಿಫ್ ನ ಚಿತ್ರಮಂದಿರದಲ್ಲಿ ನೋಡಿದೆವು. ಚಿತ್ರದ ಆರಂಭದಲ್ಲಿ 13-4-1919ರ ಆ ಕರಾಳ ದಿನದ ಘಟನೆಗಳನ್ನು ತೋರಿಸಿದ್ದಾರೆ. ಹೇಗೆ ಮರೆಯಲಾದೀತು ಈ ದೃಶ್ಯಗಳನ್ನು? ಸಿನಿಮಾ ಮುಗಿದ ನಂತರವೂ ಕಣ್ಣ ಮುಂದೆ ಅನವರತ ರೀಲುಗಳಂತೆ ಅದೇ ದೃಶ್ಯ!
ಸಿನಿಮಾದ ಕಥಾ ವಸ್ತು ಮೇಲಿನ ಘಟನೆಗಳ ಹಂದರದಲ್ಲಿ ಹೆಣೆದ ರೋಚಕ ಚಲನಚಿತ್ರ (docudrama). ಸಿನಿಮಾದ ’ನಾಯಕ’ ಶಂಕರನ್ ನಾಯರ್(ಅಕ್ಷಯ್ ಕುಮಾರ್). ಆತ ವೃತ್ತಿಯಿಂದ ವಕೀಲ. ಬ್ರಿಟಿಷರಿಂದ ನಿಯುಕ್ತನಾದ ವೈಸರಾಯ್ ಕೌನ್ಸಿಲ್ ನ ಹಿರಿಯ ಸದಸ್ಯ ಹಾಗು ತನ್ನ ’ಸೇವೆಗೆ’ ಬ್ರಿಟಿಶ್ ಸರಕಾರದಿಂದ ನೈಟ್( knighthood) ಪದವಿನ್ನು ಪಡೆದಿದ್ದ ಸಹ. ಜಾಲಿಯಾನ್ವಾಲಾ ಬಾಗ್ ನ ಕ್ರೂರ ಹತ್ಯಾಕಾಂಡದ ನಂತರ ಸತ್ಯಾನ್ವೇಷಣೆಯ ವಿಚಾರಣೆ ನಡೆಸಿ (ತಮ್ಮ ಪರವಾಗಿ)ವರದಿಮಾಡಲು ಸರಕಾರದಿಂದ ನೇಮಿತವಾದವನು ಬರಬರುತ್ತ ಘಟನೆಗಳ ಹಿಂದಿನ ಸತ್ಯ ತೆರೆದುಕೊಂಡಂತೆ ಭಾರತೀಯರ ಪರವಾಗಿ ಹೋರಾಡುತ್ತಾನೆ. ಅಂಥ ಭಾರತಮಾತೆಯ ಧೀರ ಪುತ್ರನ ಕಥೆ ಅದು. ಜಾಲಿಯನ್ವಾಲಾ ಬಾಗ್ನಲ್ಲಿ ಕೂಡಿದ್ದ ಸಿಖ್ ಜನರು ಶಸ್ತ್ರಧಾರಿಗಳಾಗಿದ್ದರೆಂದು ನಂಬುವಂತೆ ಸರಕಾರದಿಂದ ಪ್ರಚಾರ ಮಾಡಲಾಗಿತ್ತು. ನಿಜ ಸಂಗತಿಯಲ್ಲಿ ಬೈಸಾಕಿ ದಿನದಲ್ಲಿ, ಅವರೆಲ್ಲ ರೌಲಟ್ಟ್ ಆಕ್ಟ್ ನ ಕುರಿತು ಶಾಂತಿಯುತ ಪ್ರತಿಭಟನೆಗಾಗಿ ಕೂಡಿದ್ದರು, ಮತ್ತು ಬ್ರಿಟಿಷ್ ಸರ್ಕಾರದ ಜನರಲ್ ಡೈಯರ್ ನೀಡಿದ ಆದೇಶ ಜನಾಂಗೀಯ ಘೋರ ನರಮೇಧಕ್ಕೆ ಕಾರಣವಾಯಿತೆನ್ನುವ ಸತ್ಯವನ್ನು ಮುಚ್ಚಿಡುವ ಪ್ರಯತ್ನಗಳು ಎನ್ನುವದನ್ನು ಸಿನಿಮಾ ಸ್ಪಷ್ಟಪಡಿಸುತ್ತದೆ. ಇದೊಂದು ಮನಸೆಳೆಯುವ ಕೋರ್ಟ್ ರೂಂ ನಾಟಕ. ಬ್ರಿಟಿಷರ ಪರ ವಕೀಲರಾಗಿ ನೆವಿಲ್ ಮೆಕಿನ್ಲಿ (ಮಾಧವನ್) ಮತ್ತು ಬಾರತೀಯರ ಪರವಾಗಿ ಶಂಕರನ್ ನಾಯರ್ (ಅಕ್ಷಯ್ ಕುಮಾರ್) ಅವರ ಮಧ್ಯೆ ನಡೆಯುವ ಘರ್ಷಣೆ ವೀಕ್ಷಿಸಲು ಯೋಗ್ಯವಾಗಿದೆ.
ದಿಲ್ರೀತ್ ಕೌರ್ ಗಿಲ್ (ಅನನ್ಯ ಪಾಂಡೆ ) ಕಿರಿಯ ವಕೀಲಳು, ಆದರೆ ನೂರು ವರ್ಷಗಳ ಹಿಂದೆ, ಸತ್ಯಕ್ಕಾಗಿ ಶಂಕರನ್ ನಾಯರ್ ಜೊತೆ ಸೇರಿ, ಅವರನ್ನು ಪ್ರೇರೇಪಿಸಿದ ವೀರ ಯೋಧೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾಳೆ. ಚಿತ್ರಕಥೆಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿದ್ದರಿಂದ, (ಉದಾಹರಣೆಗಾಗಿ, ಮೆಕಿನ್ಲಿ ಮತ್ತು ದಿಲ್ರೀತ್ ಗಿಲ್ ಪಾತ್ರಗಳು ಕಾಲ್ಪನಿಕ) ಇದನ್ನು ಸಾಕ್ಷಿಚಿತ್ರ (documentary) ಎಂದು ಪರಿಗಣಿಸಲಾಗದು. ಆದರೂ ಅಜ್ಞಾತವಾಗಿದ್ದ ಯೋಧರ ಬಗ್ಗೆ, ಮುಚ್ಚಿಟ್ಟ ನಮ್ಮ ಭಾರತದ ಸ್ವಾತಂತ್ರದ ಹೋರಾಟದ ಪ್ರಮುಖ ಅಧ್ಯಾಯವನ್ನು ಬಹಿರಂಗ ಪಡಿಸಿರುವ ಈ ಚಲನ ಚಿತ್ರವನ್ನು ಎಲ್ಲ ಭಾರತೀಯರು ನೋಡಲೇ ಬೇಕು. 15 ವರ್ಷದ ಮೇಲಿನ ಮಕ್ಕಳಿದ್ದರೆ ಅವರನ್ನ ಕರೆದುಕೊಂಡು ಹೋಗಿರಿ. ( ಹತ್ಯಾಕಾಂಡದ ತೀವ್ರ ಗ್ರಾಫಿಕ್ ಚಿತ್ರಣದಿಂದಾಗಿ ಯುಕೆನಲ್ಲಿ ಸೆನ್ಸಾರ್ ಬೋರ್ಡ್ನಿಂದ ’15 certificate ಕೊಡಲಾಗಿದೆ). ನೀವೂ ಪರಿವಾರ ಸಮೇತವಾಗಿ ನೋಡಿ ಎಂದು ಶಿಫಾರಸ್ಸು ಮಾಡ ಬಲ್ಲೆ.
106 ವರ್ಷಗಳಾದ ನಂತರವೂ ನ್ಯಾಯಕ್ಕಾಗಿ ಭಾರತೀಯರ ಹೋರಾಟ ಮುಂದುವರಿಯುತ್ತಿದೆ. ಚಿತ್ರದ ಕೊನೆಯಲ್ಲಿ ಬ್ರಿಟಿಷ್ ಸರ್ಕಾರವು ಇನ್ನೂ ಕ್ಷಮಾಪಣೆ ಕೇಳಿಲ್ಲ ಎಂಬ ವಾಸ್ತವವನ್ನು ತಿಳಿಸಿದ್ದಾರೆ. ಇತಿಹಾಸದ ಪುಟಗಳಲ್ಲಿ ಶಂಕರ್ ನಾಯರ್ ಅವರಂತಹ ಉತ್ಕಟ ದೇಶಪ್ರೇಮಿಯ ಕೊಡುಗೆಯ ಬಗ್ಗೆ ಇಲ್ಲಿಯವರೆಗೂ ಕೇಳಿರಲಿಲ್ಲವಲ್ಲ ಎಂದು ನನಗೆ ಬೇಸರವಾಯಿತು.

- ಶಾಲಿನಿ ಜ್ಞಾನಸುಬ್ರಹ್ಮಣಿಯನ್
Learning & Development Trainer
Cardiff
Wales, U K


ಚಿತ್ರ ಕೃಪೆ:  ಎಲ್ಲ ಫೋಟೋಗಳೂ ಲೇಖಕಿಯವರವು: (ಚತುರ್ವೇದಿಯವರದನ್ನು ಬಿಟ್ಟು - CC). ಲೇಖನದ ಅಡಿಯಲ್ಲಿಯ ಚಿತ್ರಗಳು ಜಾಲಿಯನ್ ವಾಲಾ ಬಾಗ್ ದೃಶ್ಯಗಳು. ಭಿತ್ತಿ ಶಿಲ್ಪಗಳು ಮತ್ತು ಸ್ಮಾರಕಗಳು ಮತ್ತು ಒಂದು ಅಮರಜ್ಯೋತಿ