ಕಿವಿನೋವು ಮತ್ತು ಕೆಲವು ಕವನಗಳು

ಈ ವಾರದ ಅನಿವಾಸಿಯಲ್ಲಿ ಹೊಸ ಬರಹಗಾರರು, ವಿಜಯ್ ಖುರ್ಸಾಪೂರರ ಕವಂಗಳಿವೆ, ಓದಿ ಹರಸಿ. ಉಮೇಶ ನಾಗಲೋಟಿಮಠ ಈ ಮೊದಲು ಒಂದು ಸಲ ಅನಿವಾಸಿಗೆ ಬರೆದಿದ್ದಾರೆ, ಅವರಿಗೆ ಮತ್ತೊಮ್ಮೆ ಸ್ವಾಗತ. ಇಬ್ಬಾರೂ ಇನ್ನಷ್ಟು ಕನ್ನಡದಲ್ಲಿ ಬರೆಯಲಿ ಎಂದು ಆಶಿಸುತ್ತೇನೆ. – ಸಂ.

ಕಿವಿನೋವು: ಡಾ ಉಮೇಶ ನಾಗಲೋಟಿಮಠ ಬರೆದ ಲೇಖನ

ಲೇಖಕರ ಪರಿಚಯ: ಕಿವಿ ಮೂಗು ಗಂಟಲು ವೈದ್ಯರು, ಹುಬ್ಬಳ್ಳಿಯಲ್ಲಿ ಜನನ, ಬೆಳಗಾವಿಯಲ್ಲಿ ವಿದ್ಯಾಭ್ಯಾಸ . ಭಾರತದಲ್ಲಿ ಸುಮಾರು ೧೭ ವರ್ಷ ಸೇವೆ, ಕಳೆದ ಸುಮಾರು ೯ ವರ್ಷಗಳಿಂದ ಇಂಗ್ಲೆಂಡಿನ ವಿವಿಧ ಆಸ್ಪತ್ರೆಗಳಲ್ಲಿ ಸೇವೆ. MBBS ಮಾಡುವಾಗಿನಿಂದ ಕನ್ನಡ ಬರೆಯುವ ಚಟ. ಹಲವಾರು ಲೇಖನಗಳು/ಪದ್ಯಗಳು ಪತ್ರಿಕೆಯಲ್ಲಿ, ಪುಸ್ತಕಗಳಲ್ಲಿ ಪ್ರಕಟವಾಗಿವೆ , ಆಕಾಶವಾಣಿಯಲ್ಲಿ ಹಲವು ಭಾಷಣ /ಸಂದರ್ಶನ. ವೃತ್ತಿಯಲ್ಲಿ ಇಂಗ್ಲೆಂಡಿನ ರೊವಿನಾ ರೇಯನ್ ಪ್ರಶಸ್ತಿ

ನಾನು ಇಂಗ್ಲೆಂಡಿನ ಚೆಸ್ಟರ್ ಎಂಬ ಊರಿನಲ್ಲಿ ಕಿವಿ, ಮೂಗು ಮತ್ತು ಗಂಟಲು ತಜ್ಞನಾಗಿ ಒಂದು ರವಿವಾರ ಕರ್ತವ್ಯದ ಮೇಲಿದ್ದೆ. ಸಂಜೆ ಸುಮಾರು ೧೦ ವರ್ಷದ ಹುಡುಗ ಕಿವಿನೋವು ಮತ್ತು ಜ್ವರದಿಂದ ದಾಖಲಾಗಿದ್ದ. ಆತನಿಗೆ ಬೇಕಾದ ರೋಗನಿರೋಧಕ ಔಷಧಿ (ಆಂಟಿಬಯೋಟಿಕ್) ಕೊಡುತ್ತಿದ್ದೆವು. ಸಿ.ಟಿ ಸ್ಕ್ಯಾನ್ ಮಾಡಿಸಿದಾಗ ಕಿವಿಯಲ್ಲಿ ಕೀವು ತುಂಬಿಕೊಂಡದ್ದು ಗೊತ್ತಾಗಿ ಆತನಿಗೆ ಶಸ್ತ್ರಕ್ರಿಯೆ (ಆಪೆರೇಷನ್) ಮಾಡುವುದೋ ಅಥವಾ ಇನ್ನೊಂದಿಷ್ಟು ಔಷಧಿ ಕೊಟ್ಟು ಸ್ವಲ್ಪ ಕಾಯ್ದು ನೋಡೋವುದೋ ಎಂಬ ವಿಚಾರದಲ್ಲಿದ್ದೆವು . ರಾತ್ರಿ ಆದರೂ ಆ ಹುಡುಗನ ಕಿವಿನೋವು ಹೆಚ್ಚಾಯಿತೇ ವಿನಹ ಕಡಿಮೆಯಾಗಲಿಲ್ಲ . ಆಗ ನನ್ನ ಬಾಸ್ ನನಗೆ ಆಪೆರೇಷನ್ ಮಾಡಲು ಹೇಳಿದರು. ನಾನು ರಾತ್ರಿ ಸುಮಾರು ೩ ಗಂಟೆಗೆ ಆಪೆರೇಷನ್ ಕೊಠಡಿಗೆ ಹೋಗಿ ಬಾಲಕನಿಗೆ ಅರಿವಳಿಕೆ (anesthesia) ನೀಡಿ ಕಿವಿಯ ಪರದೆಯಲ್ಲಿ ಸಣ್ಣ ಛೇದವನ್ನು ಮಾಡಿದಾಗ ಬಹಳ ಕೀವು ಹೊರಗಡೆ ಬಂದಿತು. ಅಲ್ಲಿಯವರೆಗೆ ಹಾಸಿಗೆ ಹಿಡಿದು ಮಲಗಿದ ಆ ಬಾಲಕ ಮರುದಿನ ಮುಂಜಾನೆ ವಾರ್ಡಿನಲ್ಲಿ ಓಡಾಡತೊಡಗಿದ್ದ. ಆತನ ತಂದೆ ತಾಯಿ ನನಗೆ “ಒಹೋ, ಏನು ಮ್ಯಾಜಿಕ್ ಮಾಡಿದಿರಿ ಡಾಕ್ಟ್ರೇ ?” ಎಂದು ತುಂಬಾ ಖುಷಿಯಿಂದ ಕೇಳಿದರು.

ನಾನು ಮಾಡಿದ ಆ ಚಿಕ್ಕ ಶಸ್ತ್ರಕ್ರಿಯೆಗೆ ಮೈರಿಂಗೋಟೋಮಿ (Myringotomy) ಎನ್ನುತ್ತಾರೆ. ಕಿವಿಯಲ್ಲಿ ಕೀವು ತುಂಬಿ ಒತ್ತಡಲ್ಲಿದ್ದಾಗ ರೋಗಿ ಅತೀವ ಕಿವಿನೋವಿನಿಂದ ಬಳಲುತ್ತಾನೆ. ಔಷಧಿಗಳಿಂದ ಆ ಕೀವು ಕಡಿಮೆಯಾಗದಿದ್ದರೆ ಈ ಆಪೆರೇಷನ್ ಮಾಡಬೇಕಾಗುತ್ತದೆ. ಇಲ್ಲಿ ಸೂಕ್ಷ್ಮದರ್ಶಕ ಯಂತ್ರದಲ್ಲಿ ನೋಡುತ್ತ ಕಿವಿಯ ಪರದೆಯಲ್ಲಿ ಒಂದು ಸಣ್ಣ ಛೇದವನ್ನು ಮಾಡುತ್ತಾರೆ, ಇದರಿಂದ ಆ ಕೀವು ಹೊರಗಡೆ ಬಂದು ನೋವು, ಜ್ವರ ಕಡಿಮೆಯಾಗುತ್ತದೆ. ಈ ಆಪೆರೇಷನ್ ಮಾಡದಿದ್ದರೆ ಹಲವು ಬಾರಿ ಕಿವಿ ಪರದೆ ಕೊಳೆತು ಅದರಲ್ಲಿ ದೊಡ್ಡ ತೂತಾಗುತ್ತದೆ. ನಂತರದಲ್ಲಿ ಈ ತೂತಿನಿಂದ ಕಿವುಡುತನ, ಮೇಲಿಂದ ಮೇಲೆ ಕಿವಿಯ ಸೋಂಕು ಇತ್ಯಾದಿ ತೊಂದರೆಗಳು ಬರುತ್ತವೆ. ಇದರ ಒಟ್ಟು ಸಾರಾಂಶ ಎಂದರೆ ಕಿವಿಯಲ್ಲಿ ಸೋಂಕಾಗಿ ಕೀವು ತುಂಬಿ ಅದು ಔಷಧಿಗೆ ಕಡಿಮೆಯಾಗದಿದ್ದರೆ ಕಿವಿಪರದೆಯಲ್ಲಿ ಛೇದ ಮಾಡಿ ಆ ಕೀವನ್ನು ಹೊರತೆಗೆಯಬೇಕು. ಇದನ್ನು ಯಾಕೆ ಹೇಳುತ್ತಿರುವೆ ಎಂದು ನಿಮಗೆ ಮುಂದೆ ಗೊತ್ತಾಗುತ್ತದೆ.

ನಾನು ಈಗ ಹಲವು ವರ್ಷಗಳ ಹಿಂದೆ ಹೋಗುವೆ. ನಾನು ಬೆಳಗಾವಿಯಲ್ಲಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿ ಇದ್ದಾಗಿನಿಂದ ಹಿಡಿದು ಹುಬ್ಬಳ್ಳಿಯಲ್ಲಿ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕನಾಗಿರುವವರೆಗೆ ನಾನು ನೋಡಿದ್ದೇನೆಂದರೆ ಹಲವಾರು ರೋಗಿಗಳು ಕಿವಿ ನೋವಾದಾಗ ಕಿವಿಯಲ್ಲಿ ಬಿಸಿ ಎಣ್ಣೆ, ಬಿಸಿ ಎಣ್ಣೆಯಲ್ಲಿ ಬಳ್ಳೊಳ್ಳಿ, ಇಲ್ಲವೇ ಬಳ್ಳೊಳ್ಳಿ ಜಜ್ಜಿ ಅದರ ರಸ ಕಿವಿಯಲ್ಲಿ ಹಾಕುವುದು, ಎಣ್ಣೆಗೆ ಜೊತೆಗೆ ಸ್ವಲ್ಪ ಅರಿಶಿಣ – ಹೀಗೆ ಹಲವು ಮನೆ ಮದ್ದು ಮಾಡುತ್ತಿದ್ದರು. ನಮಗೋ ಇದು ಬಲು ವಿಚಿತ್ರವಾಗಿತ್ತು. ಯಾಕೆಂದು ಅವರಿಗೆ ಕೇಳಿದಾಗ ಅವರು ನಮ್ಮ ಅಜ್ಜ, ಅಜ್ಜಿ, ತಾಯಿ ಹೀಗೆ ಮಾಡಿರೆಂದು ಹೇಳಿದಕ್ಕೆ ನಾವು ಮಾಡಿದೆವು ಎನ್ನುತ್ತಿದ್ದರು. ಅವರಾರಿಗೂ ಯಾಕೆ ಎಂದು ಗೊತ್ತಿರಲಿಲ್ಲ, ಆದರೆ ಹಿರಿಯರು ಹೇಳಿದಂತೆ ಮಾಡುತ್ತಿದ್ದರು. ಆ ಹಿರಿಯರನ್ನು ಕೇಳಿದಾಗ ಅವರಿಗೂ ಇದು ಯಾಕೆ ಎಂದು ಗೊತ್ತಿರಲಿಲ್ಲ ಆದರೆ ಇದನ್ನು ಮುಂದುವರೆಸುತ್ತಿದ್ದರು.

ಇದರ ಬಗ್ಗೆ ನಾವು ಸ್ವಲ್ಪ ಅಧ್ಯಯನ/ ಹುಡುಕಾಟ ನಡೆಸಿದೆವು. ನಮಗೆ ಸಿಕ್ಕ ಮಾಹಿತಿ ಬಹಳಷ್ಟು ಕುತೂಹಲಕಾರಿಯಾಗಿತ್ತು. ಆಯುರ್ವೇದದಲ್ಲಿ ಕಿವಿ ನೋವಿನ ಮೂಲವನ್ನು ಹೇಗೆ ಕಂಡು ಹಿಡಿಯುವುದು ಎಂಬ ಬಗ್ಗೆ ಸವಿಸ್ತಾರವಾದ ವಿವರಣೆ ಇದೆ. ಕಿವಿ ನೋವು ಹಲವಾರು ಕಾರಣಗಳಿಂದ ಬರಬಹುದು. ಕೆಲವು ರೋಗಗಳಲ್ಲಿ ಜ್ವರ ಇದ್ದರೆ, ಇನ್ನು ಕೆಲವು ಕಡೆ ನಾಡಿಮಿಡಿತ ಹೆಚ್ಚಾಗಿರುತ್ತದೆ. ಇನ್ನು ಹಲವೆಡೆ ಕಿವಿ ಸ್ವಲ್ಪ ಮಂದವಾಗಿರುತ್ತದೆ. ಇನ್ನು ಹಲವು ಕಡೆ ಕಿವಿ ಹೊರಗೆ ಬಾವು ಕಾಣಿಸುತ್ತದೆ. ಇವುಗಳ ಮೇಲೆ ನಾವು ರೋಗಿಗೆ ಏನಾಗಿದೆ ಎಂದು ಸುಮಾರು ೯೦% ವರೆಗೂ ಸರಿಯಾಗಿ ನಿದಾನಿಸಬಹುದು (ಈ ಕೋವಿಡ್ ಮಹಾಮಾರಿ ನಂತರ ಇಡೀ ಜಗತ್ತಿನಲ್ಲೆಲ್ಲ ವೈದ್ಯರು ಫೋನ್ ಅಥವಾ ಇಂಟರನೆಟ್ ಮೂಲಕ ಚಿಕಿತ್ಸೆ ನೀಡುತ್ತಿದ್ದಾರೆ. ಈ ತರಹದ ವ್ಯವಸ್ಥೆಯಲ್ಲಿ ಅವರು ಬಹಳಷ್ಟು ಬಾರಿ ಪ್ರಶ್ನೋತ್ತರಗಳ ಮೇಲೆಯೇ ರೋಗವನ್ನು ಗುರುತಿಸುತ್ತಾರೆ.)

ಬೆಳ್ಳೊಳ್ಳಿ ರಸ ಒಂದು ಕೆರೆಟೊಲೈಟಿಕ್ (kerolytic), ಅಂದರೆ ಅದು ಚರ್ಮದ ಹೊರಪದರನ್ನು ಕರಗಿಸುವ ಶಕ್ತಿ ಹೊಂದಿದೆ. ಅರಿಶಿಣ ಒಂದು ಆಂಟಿಸೆಪ್ಟಿಕ್ (antiseptic ), ಅಂದರೆ ರೋಗಾಣುಗಳನ್ನು ನಾಶ ಮಾಡುವ ಶಕ್ತಿ ಹೊಂದಿದೆ. ಈಗ ಆಯುರ್ವೇದದಲ್ಲಿ ಈ ರೀತಿಯ ಕಿವಿಯ ಸೋಂಕಿಗೆ (acute otitis media , not responding to antibiotics ) ಯಾವ ಚಿಕಿತ್ಸೆ ಹೇಳಿದ್ದಾರೆ ಎಂದು ನೋಡೋಣ. ಒಂದು ಪಾತ್ರೆಯಲ್ಲಿ ಎಣ್ಣೆ , ಬಳ್ಳೊಳ್ಳಿ ರಸ/ಬಳ್ಳೊಳ್ಳಿ ,ಅರಿಶಿನ ಹಾಕಿ ಕಾಯಿಸಿ ಆ ಕಾಯ್ದ ಒಂದು ಹನಿ ಎಣ್ಣೆಯನ್ನು ಕಿವಿಯ ಪರದೆಯ ಮೇಲೆ ಹಾಕಬೇಕು. ಇಲ್ಲಿ ರೋಗಿ ಹೇಗೆ ಮಲಗಬೇಕು, ಕಿವಿಯಲ್ಲಿ ಎಣ್ಣೆ ಯಾವ ರೀತಿ ಹಾಕಬೇಕು , ಯಾವ ಸಲಕರಣೆ ಹೇಗೆ ಉಪಯೋಗಿಸಬೇಕೆಂದು ಎಂದು ಸವಿಸ್ತಾರವಾಗಿ ತಿಳಿಸಿದ್ದಾರೆ. ಆ ಕಾಯ್ದ ಎಣ್ಣೆ ಹನಿ ಕಿವಿ ಪರದೆಯ ಮೇಲೆ ಬಿದ್ದ ತಕ್ಷಣ ಹೊರಗಿನ ಪದರು (ಕಿವಿ ಪರದೆಗೆ ೩ ಪದರುಗಳು ಇರುತ್ತವೆ ) ಬೆಳ್ಳೊಳ್ಳಿ ರಸದಿಂದ ಕರಗಿ ಹೋಗಿ ಉಳಿದ ಪದರುಗಳು ಬಿಸಿ ಎಣ್ಣೆಯಿಂದ ಕರಗಿ ಕಿವಿ ಪರದೆಯಲ್ಲಿ ಅತಿ ಸಣ್ಣ ಛೇದವಾಗಿ ಕಿವಿಯ ಒಳಗಿನ ಕೀವು ಹೊರಗೆ ಬರುತ್ತದೆ ಹಾಗು ರೋಗಿಗೆ ನೋವು ತಕ್ಷಣ ಶಮನವಾಗುತ್ತದೆ. ಅದರಲ್ಲಿನ ಅರಿಶಿನ ಕಿವಿಯಲ್ಲಿ ಸೋಂಕು ಮಾಡಿದ ರೋಗಾಣುಗಳ ವಿರುದ್ಧ ಹೋರಾಡುತ್ತದೆ ಹಾಗು ಈ ಎಲ್ಲ ಚಟುವಟಿಕೆ ಹೊರಗಿನ ಸೋಂಕುರಹಿತವಾಗಿ (in sterile condition) ನಡೆಯಲು ಸಹಾಯ ಮಾಡುತ್ತದೆ. ಈಗ ಇದನ್ನು ಮೈರಿಂಗೋಟೋಮಿ (myringotomy ) ಶಸ್ತ್ರ ಕ್ರಿಯೆಗೆ ಹೋಲಿಸಿದಾಗ ಎಲ್ಲವು ಒಂದೇ ಆಗಿದೆ ಅನ್ನಿಸುವುದು. ನಾವು ಇಂದು ಮೈಕ್ರೋಸ್ಕೋಪ್, ಅನಾಸ್ಥೆಸಿಯಾ , ಸ್ಟೆರಿಲೈಸಷನ್ , ಆಂಟಿಸೆಪ್ಟಿಕ್ ಇತ್ಯಾದಿ ಪಾಶ್ಚಿಮಾತ್ಯ ಪದಗಳನ್ನು ಮತ್ತು ವಿಧಾನಗಳನ್ನು ಬಳಸಿ ಆಪೆರೇಶನ್ ಮಾಡುತ್ತೇವೆ. ಆದರೆ ಎರೆಡೂ ಚಿಕಿತ್ಸಾ ಪದ್ಧತಿಗಳಲ್ಲಿ ಇದನ್ನು ಮಾಡುವ ವಿಧಾನ ಬೇರೆ ಇದ್ದರೂ ಚಿಕಿತ್ಸಾ ತತ್ವ ಒಂದೇ ಇದೆ.

ಈ ಚಿಕಿತ್ಸಾ ಪದ್ಧತಿ ಅಪಭ್ರಮಶವಾಗಿ ಜನರು ತಮಗೆ ತೋಚಿದ್ದನ್ನು ಮಾಡುತ್ತಾ ಆಯುರ್ವೇದವನ್ನು ಮೂರಾಬಟ್ಟೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಆಯುರ್ವೇದ ಆಧುನಿಕ ಚಿಕಿತ್ಸಾ ಪದ್ದತಿಯ ಅಂಶಗಳನ್ನು ತನ್ನೊಳಗೆ ಕೂಡಿಸಿಕೊಳ್ಳದೆ ಹಳೆಯ ಮುದುಕನಂತೆ ಆಗಿದೆ. ಇನ್ನು ಭಾರತದಲ್ಲಿ ಅಲೋಪಥಿ ಮತ್ತು ಆಯುರ್ವೇದ ವೈದ್ಯರು ಹೊಡೆದಾಡುತ್ತ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಆಯುರ್ವೇದಕ್ಕೆ ಸರಕಾರದ ಪ್ರೋತ್ಸಾಹ, ಸಂಶೋಧನೆಗೆ ಧನ ಸಹಾಯ, ಜನರ ಪ್ರೋತ್ಸಾಹ ಇದಾವುದೂ ಸಿಗದೇ ಅದು ಮುರುಕುಲು ಮನೆಯಲ್ಲಿನ, ಹರಕಲು ಉಟ್ಟ ಮುದಿ ಜಾಣನಂತೆ ಆಗಿದೆ.

ನಾನು ಅಂದು ನನ್ನ ಬಾಸ್ ಅವರಿಗೆ ಈ ಸುಮಾರು ೩-೪ ಸಾವಿರ ವರ್ಷ ಹಳೆಯದಾದ ಆಯುರ್ವೇದ ಚಿಕಿತ್ಸಾ ಪದ್ಧತಿ ಬಗ್ಗೆ ಹೇಳಿ ಕಿವಿಯ ಸೋಂಕಿಗೆ ಯಾವ ರೀತಿ ಚಿಕಿತ್ಸಾ ಪದ್ಧತಿ ಹೇಳಿದ್ದಾರೆ ಎಂದು ವಿವರಿಸಿದೆ. ಆಗ ಅವರು ನನ್ನನ್ನು ಕುರಿತು , “ಹೌದಾ? ‘ಎಂದು ಸಂಶಯದಲ್ಲಿ ಹೇಳಿದರು. ಆಗ ನನಗೆ ಯಾವ ದುಃಖವಾಗಲಿಲ್ಲ. ಏಕೆಂದರೆ ಇದನ್ನು ಮೊದಲು ಅನೇಕ ಭಾರತೀಯರೇ ನಂಬುತ್ತಿಲ್ಲ, ಇನ್ನು ಬಹಳಷ್ಟು ವಿದೇಶಿಜನರ ಬಗ್ಗೆ ಏನು ಹೇಳಬೇಕು? ಇದು ಅವರ ತಪ್ಪು ಅಲ್ಲ. ಏಕೆಂದರೆ ಇದರ ಬಗ್ಗೆ ಬಹಳ ಜನ ತಿಳಿದುಕೊಂಡಿಲ್ಲ. ಭಾರತದಲ್ಲಿ ನಕಲಿ ಆಯುರ್ವೇದ ಪಂಡಿತರು ಬಹಳವಾಗಿದ್ದು ಜನರಿಗೆ ಬಾರಿ ಮೋಸ ಮಾಡುತ್ತಾರೆ. ಇದರಿಂದ ಜನ ಆಯುರ್ವೇದದಲ್ಲಿ ನಂಬಿಕೆ ಕಳೆದುಕೊಳ್ಳುತ್ತಾರೆ. ಇದನ್ನು ಸುಧಾರಿಸುವುದೆಂದರೆ ಬೆಕ್ಕಿನ ಕೊರಳಿಗೆ ಗಂಟೆ ಕಟ್ಟುವ ಕೆಲಸ.

ಇನ್ನು ಅನೇಕರಿಗೆ ಪ್ಲಾಸ್ಟಿಕ್ ಸರ್ಜರಿ ಜಗತ್ತಿಗೆ ಯಾವ ದೇಶದಿಂದ ಬಂತು ಎಂದು ಕೇಳಿದರೆ ಗೊತ್ತಿಲ್ಲ ಎಂಬ ಉತ್ತರವೇ ಬರುತ್ತದೆ. ಇನ್ನು ಹಲವು ಭೂಪರು ಇಂಗ್ಲೆಂಡ್, ಅಮೇರಿಕಾ, ಯುರೋಪ್ ದೇಶಗಳು ಎಂದೆಲ್ಲ ಹೇಳಬಹುದು. ಇದು ಭಾರತದಿಂದ ಜಗತ್ತಿಗೆ ಕಲಿಸಲ್ಪಟ್ಟಿತು ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಮೂಗಿನ ಪ್ಲಾಸ್ಟಿಕ್ ಸರ್ಜರಿ (rhinoplasty ) ಭಾರತದ ಕರ್ನಾಟಕದಿಂದ (ಮೊದಲಿನ ಮೈಸೂರು) ಇಂಗ್ಲೆಂಡಿಗೆ ಹೋಯಿತು. ಈ ಶಸ್ತ್ರಕ್ರಿಯೆಯನ್ನು ಭಾರತದ ಅನೇಕ ಪ್ರದೇಶಗಳಲ್ಲಿ ಮಾಡುತ್ತಿದ್ದರು. ಇದಲ್ಲದೆ ಇನ್ನು ಅನೇಕ ಶಸ್ತ್ರಕ್ರಿಯೆ ನಡೆಯುತ್ತಿದ್ದವು. ೧೭೯೪ರಲ್ಲಿ ಲಂಡನ್ನಿನ ಜಂಟಲ್ಮನಾಸ್ ಮ್ಯಾಗಜಿನ್ ದಲ್ಲಿ ಪ್ರಕಾಶನವಾದ ಒಂದು ಲೇಖನದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಒಬ್ಬ ನೌಕರನ ಕತ್ತರಿಸಲ್ಪಟ್ಟ ಮೂಗನ್ನು ಕರ್ನಾಟಕದಲ್ಲಿ ಈ ಪ್ಲಾಸ್ಟಿಕ್ ಸರ್ಜರಿ ಮೂಲಕ ಪೂರ್ತಿ ಸರಿ ಮಾಡಲಾದ ಬಗ್ಗೆ ವಿವರಿಸಿದ್ದಾರೆ . ಈ ಶಸ್ತ್ರ ಚಿಕಿತ್ಸೆ ನೋಡಿದ ಬ್ರಿಟಿಷ್ ಸ್ವಾಸ್ಥ್ಯ ಅಧಿಕಾರಿಗಳು ತಮ್ಮ ಸರಕಾರಕ್ಕೆ ಇದನ್ನು ತಿಳಿಸಿದಾಗ ಆಗಿನ ಬ್ರಿಟಿಷ್ ಸರಕಾರ ಒಂದು ವೈದ್ಯರ ತಂಡವನ್ನು ಭಾರತಕ್ಕೆ ಕಳುಹಿಸಿ ಈ ಶಸ್ತ್ರಕ್ರಿಯೆ ಬಗ್ಗೆ ಕೂಲಂಕುಷವಾಗಿ ಅಧ್ಯಯನ ಮಾಡಿ ಬರಲು ಹೇಳಿದರು. ತದನಂತರ ಪ್ಲಾಸ್ಟಿಕ್ ಸರ್ಜರಿ ಯೂರೋಪಿನಲ್ಲಿ ಬೆಳೆಯಿತು ಹಾಗು ದುರದೃಷ್ಟದಿಂದ ಭಾರತದಲ್ಲಿ ಅಳಿಯಿತು. ಇದರ ಬಗ್ಗೆ ನಾನು ಕೇಳಿದ್ದೆ, ಅದರ ಬಗ್ಗೆ ನೋಡುವ ಭಾಗ್ಯ ನನಗೆ ಲಂಡನ್ನಿನ ವೆಲ್ ಕಮ್ ವಸ್ತುಸಂಗ್ರಹಾಲಯದಲ್ಲಿ ಲಭಿಸಿತು. ನಾನು ಆ ಮ್ಯೂಸಿಯಂಗೆ ಭೆಟ್ಟಿ ಕೊಟ್ಟಾಗ ಅಲ್ಲಿ ಆಯುರ್ವೇದದ ಬಗ್ಗೆ ಪ್ರದರ್ಶನವೊಂದು ನಡೆಯುತ್ತಿದ್ದದ್ದು ಕಾಕತಾಳೀಯ. ಅಲ್ಲಿ ಈ ಪ್ಲಾಸ್ಟಿಕ್ ಸರ್ಜರಿ ಹೇಗೆ ಇಂಗ್ಲೆಂಡಿಗೆ ಬಂದಿತು ಎಂದು ವಿವರಿಸಿದ್ದಾರೆ. ಅಲ್ಲಿ ಹಾಕಿರುವ ಭಾರತೀಯ ಆಯುರ್ವೇದ ಬಗ್ಗೆ ಮಾಹಿತಿ ಮತ್ತು ಫೋಟೋಗಳನ್ನೂ ನೋಡಿದಾಗ ನನ್ನ ಮನಸ್ಸು ಹೊಯ್ದಾಡಿತು. ಒಂದಡೆ ಖುಷಿ, ಒಂದೆಡೆ ದುಃಖ ಆಗುತ್ತಿತ್ತು. ಜಗತ್ತಿಗೆ ಜ್ಞಾನ ದೀಪ ಹಚ್ಚಿ ತನ್ನ ಮನೆಯನ್ನೇ ಕತ್ತಲಾಗಿಸಿಕೊಂಡಿತು ನನ್ನ ಭಾರತ. ಅದಕ್ಕೆ ಅನೇಕ ಕಾರಣಗಳಿವೆ, ಅವುಗಳನ್ನು ಇಲ್ಲಿ ಚರ್ಚಿಸುವುದು ಈ ಲೇಖನದ ಚೌಕಟ್ಟನ್ನು ದಾಟುತ್ತದೆ.

ವಿಜಯ್ ಖುರ್ಸಾಪೂರ ಬರೆದ ಕೆಲವು ಕವಿತೆಗಳು

ಕವಿಯ ಪರಿಚಯ: ವೃತ್ತಿಯಿಂದ ಏರೋಸ್ಪೇಸ್ ಇಂಜಿನಿಯರ್, ಕಳೆದ ೧೦ ವರ್ಷಗಳಿಂದ ಇಂಗ್ಲೆಂಡ್ ನೆಲೆ, ಹುಟ್ಟಿದ ಊರು ಶಿಗ್ಗಾವಿ (ಹಾವೇರಿ ಜಿಲ್ಲೆ), ಓದಿದ್ದು ಧಾರವಾಡ, ಗದಗ, ಇಲ್ಲಿವವರೆಗೆ ಬೆಂಗಳೂರು, ಹೈದರಾಬಾದ ಮತ್ತು ಕೆನಡಾದಲ್ಲಿ ನೆಲೆಸಿ, ೪ -೫ ಏರೋಸ್ಪೇಸ್ ಕಂಪನಿಗಳಲ್ಲಿ ಕೆಲಸ. ಇತ್ತೀಚಿನ ದಿನಗಳಲ್ಲಿ ಕನ್ನಡ ಸಾಹಿತ್ಯನ್ನ ಓದುವದರಲ್ಲಿ ಆಸಕ್ತಿ ಮತ್ತು ಕೆಲವು ಚಿಕ್ಕ ಕವನಗಳನ್ನ ಬೆರೆಯುವ ಪ್ರಯತ್ನ.

ಹೊಸ ಗಾಳಿ

ಬಿಸಿಗಾಳಿಯ ಉಸಿರ ಈ ಜೀವಕೆ
ತಂಗಾಳಿಯಾಗಿ ನೀ ಬಾ
ಹೊಸ ಬಯಕೆಯ ಹೊಸ ಕನಸನ ನೀ ಹೊತ್ತು ತಾ

ಕಾಮೋ೯ಡ ಕವಿದ ಈ ಮನಕೆ
ಬೆಳಕಾಗಿ ನೀ ಬಾ
ಹೊಸ ಗುರಿಯ ಹೊಸ ಹುರುಪನ ನೀ ಹೊತ್ತು ತಾ

ಭಾರವಾದ ಹೃದಯದ ಈ ಗೂಡಿಗೆ
ಹರುಷವಾಗಿ ನೀ ಬಾ
ಹೊಸ ದಾರಿಯ ಹೊಸ ತಿರುವನ ನೀ ಹೊತ್ತು ತಾ

ಜಡವಾದ ಈ ದೇಹಕೆ
ಚೆೃತನ್ಯ ವಾಗಿ ನೀ ಬಾ
ಹೊಸ ಶೋಧನೆಯ ಹೊಸ ವಿವೇಚನೆಯನ ನೀ ಹೊತ್ತು ತಾ

ಸದಾ ಅರಸುತಿದೆ ಈ ಮನ ಹೊಸ ತನಕ್ಕಾಗಿ ಹೊಸ ಗಾಳಿಗಾಗಿ

ಹೊದಿಕೆ

ಆಳುವವನಿಗೊಂದು ಹೊದಿಕೆ
ಅಳುವವನಿಗೊಂದು ಹೊದಿಕೆ
ಬದುಕಿಗೆ ಏನೆಲ್ಲ ಹೊದಿಕೆ

ಕಾಯುವನಿಗೊಂದು ಹೊದಿಕೆ
ಕದೀಮನಿಗೊಂದು ಹೊದಿಕೆ
ಈ ಬದುಕಿಗೆ ಏನೆಲ್ಲ ಹೊದಿಕೆ

ಮನಸ್ಸಿಗೊಂದು ಹೊದಿಕೆ
ಮಾನಕೊಂದು ಹೊದಿಕೆ
ಬದುಕಿಗೆ ಏನೆಲ್ಲ ಹೊದಿಕೆ

ಧನಿಕನಿಗೊಂದು ಹೊದಿಕೆ
ದಾನಿಗೊಂದು ಹೊದಿಕೆ
ಈ ಬದುಕಿಗೆ ಏನೆನಿಲ್ಲ ಹೊದಿಕೆ

ಹೊದಿಕೆ ಇಂದ ಹೊರಬಂದಾಗ
ಸಿಗುವುದೇ ಆ ಹೊದಿಕೆಗಿದ್ದ
ಆಲಿಕೆ?

ಹೊದಿಕೆಯ ಮೇಲೆದ್ದ ಹೊದಿಕೆಗಳ
ಬಿಚ್ಚಲೊಲ್ಲೆಯಾ ನಿಜವಾಗಿ ನಿನ್ನ
ತಿಳಿಯೋದಕೆ

ಮಜಾ

ಮೊದಲ ಮಳೆ ಸುರಿಯುವಾಗ
ಬೆಚ್ಚಗೆ ಮನೆಯಲ್ಲಿ ಕೂರುವದಕ್ಕಿಂತ
ಹೊರಗಡೆ ಮಳೆಯಲಿ ನೆನೆಯುವುದೇ ಮಜಾ
ಆ ಮಣ್ಣಿನ ಸುವಾಸನೆಯಲಿ ಮನವು
ವಿಲೀನವಾಗುವಾಗ

ಬೆಳಿಗ್ಗೆ ಮೊಬೈಲ್ನಲ್ಲಿ ಅಲರಾಮು ಆಗುವಾಗ
ತಟ್ಟನೇ ಎದ್ದೇಳುವುದಕ್ಕಿಂತ
ಸ್ನೂಜ್ ಮಾಡಿ ಮತ್ತೆ ಮತ್ತೆ ನಿದ್ದೆಗೆ ಜಾರುವುದೇ ಮಜಾ
ಕನಸಿನಲ್ಲಿ ಹೊಸ ಕನಸೊಂದು ಶುರುವಾಗುವಾಗ

ಸಿನೆಮಾ ನೋಡೋಕೆ ಹೋದಾಗ
ಸಬ್ಯರ ಜೊತೆ ಬಾಲ್ಕನಿಯಲ್ಲಿ ಕೂರೋದಕ್ಕಿಂತ
ಗಾಂಧಿ ಕ್ಲಾಸ್ ನಲ್ಲಿ ಕೂರೋದೇ ಮಜಾ
ಹರುಷದ ಶಿಳ್ಳೆಗಳಲ್ಲಿ ಮನಸ್ಸು ಯವ್ವನಕ್ಕೆ ಜಾರುವಾಗ

ಭರವಸೆ

ಬಿಸಿಲಿಗೆ ಬಸವಳಿದ ತಾವರೆ
ಮುದುಡುತಿದೆ, ಜಲವನರಿಸಿ,
ಕೈ ಚಲ್ಲಿದೆ ಮೆಲ್ಲಗೆ
ಸುರಿಯಬಾರದೇ, ಮಲ್ಲಿಗೆಯ ಮಳೆ
ಅರಳಬಾರದೇ ಮೆಲ್ಲಗೆ, ಭರವಸೆಯ ಕಳೆ

ಬೆಳಕಿನೆಡೆಗೆ

ಮರುಕಳಿಸಿದ ಬೆಳಕಿನ ಬಾನ,
ಹರಡಿದೆ ಕಲರವಗಳ ಗಾನ.
ಮೌನದಲಿ ಅರಿಯುವ ಧ್ಯಾನ,
ಸವಿದಂತೆ ಹಾಲು ಜೇನ.
ಹರಿಯುವ ತಿಳಿನೀರಿನ ಸ್ನಾನ,
ಈ ಜಗದ ಮಧುರ ದಾನ.
ಇತಿ ಮಿತಿಯ ಬದುಕುವ ತನ
ಇರಿಸುವದೇ ಕೇಳಲು? ಇನ್ನೇನ

ಲ್ಯಾಂಕಶಾಯರಿನ ಭಾರತೀಯ ನೃತ್ಯ ಪರಂಪರೆ

ನಮ್ಮ ಕನಸನ್ನು ಮಕ್ಕಳ ಮೂಲಕ ನನಸಾಗಿಸುವುದು ಒಂದು ಪ್ರಶ್ನಾರ್ಹ ಪ್ರಯತ್ನ ಅನ್ನುತ್ತಾರೆ.  ಆದರೆ ಮಕ್ಕಳ ಶ್ರಮದ ಯಶಸ್ಸು ತಾಯ್ತಂದೆಯರಿಗೆ ಹೆಮ್ಮೆಯ ವಿಷಯ ಅನ್ನುವುದರಲ್ಲಿ ಎರಡು ಮಾತಿಲ್ಲ. 

ನಮಸ್ಕಾರ. ವಿಶ್ವಾವಸು ಸಂವತ್ಸರದ ಹೊಸವರ್ಷದ ಶುಭಾಶಯಗಳು. ಈ ಸಲದ ಆವೃತ್ತಿಯಲ್ಲಿ ನಮ್ಮ ಕೌಂಟಿಯ ನೃತ್ಯ ಶಾಲೆಗಳಲ್ಲಿ ಒಂದಾದ ಅಭಿನಂದನಾ ಡಾನ್ಸ್ ಅಕ್ಯಾಡೆಮಿಯ ಮತ್ತು ಅದರ ಸಂಚಾಲಕರಾದ ಶ್ರೀಮತಿ ಅಭಿನಂದನಾ ಕೋದಂಡ ಅವರ ಒಂದು ಕಿರು ಪರಿಚಯ – ವಿದ್ಯಾರ್ಥಿಯೊಬ್ಬಳ ಪಾಲಕರ ಅನುಭವದ ಸಹಿತ.  ಓದಿ ತಮ್ಮ ಅಭಿಪ್ರಾಯವನ್ನು ತಿಳಿಸುವುದು. ಧನ್ಯವಾದಗಳೊಂದಿಗೆ – ಲಕ್ಷ್ಮೀನಾರಾಯಣ ಗುಡೂರ (ವಾರದ ಸಂಪಾದಕ).
****************************
ಅಭಿನಂದನಾ ಡಾನ್ಸ್ ಅಕ್ಯಾಡೆಮಿ – ನಾಟ್ಯರಸ

*********************************

ಇಂಗ್ಲಂಡಿನಲ್ಲಿ ನನ್ನ ಕಲಿಕೆಯ ಸುತ್ತನ್ನು (training rotation) ಮುಗಿಸಿ ಪ್ರೆಸ್ಟನ್ನಿಗೆ ಬಂದು ಕನ್ಸಲ್ಟಂಟ್ ಆಗಿ ಸೇರಿದಾಗ ನಮ್ಮ ಮಗಳಿಗೆ ೩ ವರ್ಷ. ಎಲ್ಲಾ ಅನಿವಾಸಿ ಭಾರತೀಯರಂತೆ ನಾವೂ ನಮ್ಮೂರಿನಲ್ಲಿರುವ ಹಿಂದಿನ ಪೀಳಿಗೆಗೂ, ಇಲ್ಲಿ ಹುಟ್ಟಿರುವ ಮುಂದಿನ ಪೀಳಿಗೆಗೂ ಮಧ್ಯ ಪೂರ್ವ – ಪಶ್ಚಿಮಗಳಿಗೆ ಸೇತುವೆಯಾಗಿ ಬದುಕುವ ಜೀವನದ ಹಂತದಲ್ಲಿ ಇದ್ದೆವು ಅನ್ನಿ. ಆದಷ್ಟು ಭಾರತೀಯ ಪರಂಪರೆಯ ಕುರುಹುಗಳನ್ನು ಮಕ್ಕಳಿಗೆ ಪರಿಚಯಿಸಬೇಕೆಂಬ ಆಶಯವನ್ನು ನಮ್ಮ ಜೀವನದ ಓಟದ ಜೊತೆಗೇ ಹೊತ್ತುಕೊಂಡು ಓಡುತ್ತಿದ್ದೆವು.  ಮಕ್ಕಳು ಇಲ್ಲಿಯ ಸಂಗೀತ, ನೃತ್ಯ, ಸಂಸ್ಕೃತಿಯನ್ನು ಹೇಗೋ ಕಲಿತುಬಿಡುತ್ತವೆ.  ಭಾರತೀಯ ಸಂಗೀತ – ನೃತ್ಯದ ಹುಚ್ಚು ಹತ್ತಿಸಬೇಕೆಂದರೆ, ಮೊದಲು ನಮಗೆ ಆ ಹುಚ್ಚಿರಬೇಕು, ಹತ್ತಿರದಲ್ಲಿ ಎಲ್ಲಾದರೂ ಕಲಿಯುವ ಅವಕಾಶವಿರಬೇಕು ಮತ್ತು ಛಲ ಬಿಡದೆ ವಾರವೂ ಪ್ರತಿ ತರಗತಿಗೆ ಕರೆದೊಯ್ಯುವ ತಾಳ್ಮೆಯಿರಬೇಕು. ಇದು ಬೀಜ ಬಿತ್ತಿ, ನೀರು-ಗೊಬ್ಬರ ಹಾಕಿ ಸಸಿ ಏಳುವವರೆಗಿನ ಹಂತ ಅಷ್ಟೇ.  ಅಲ್ಲಿಂದ ಮುಂದೆ ಅದು ಬೆಳೆದು ಮರವೂ ಆಗಬಹುದು ಇಲ್ಲವೇ, ಮುರುಟಿ ಮಾಯವೂ ಆಗಬಹುದು.  ಆರಂಭದಲ್ಲಿ ಆಟ-ಸಂಗೀತ-ನೃತ್ಯ ಅಲ್ಲದೇ ಇನ್ನೂ ಇತರ ಪಠ್ಯೇತರ ತರಗತಿಗಳಿಗೆ ವಾರದಲ್ಲಿ ೮ ಬಾರಿ (ಶನಿವಾರ ಎರಡು!) ಕರೆದೊಯ್ದರೂ, ೧೦ನೆಯ ತರಗತಿಗೆ ಬರುವ ಹೊತ್ತಿಗೆ ಒಂದೆರಡು ಮಾತ್ರ ಉಳಿಯುತ್ತವೆ ಅನ್ನುವುದು ಸತ್ಯ; ಎಲ್ಲಾ ಅನಿವಾಸಿ ತಂದೆ-ತಾಯಂದಿರ ಅನುಭವವೂ ಹೆಚ್ಚು ಕಡಿಮೆ ಇದೇ ಇರಲಿಕ್ಕೆ ಸಾಕು. 

ಹೀಗಿರುವಾಗ, ಪ್ರೆಸ್ಟನ್ನಿನಲ್ಲಿ ಕೇಳಿಬಂದ ಹೆಸರು ಅಭಿನಂದನಾ. ಶ್ರೀಮತಿ ಅಭಿನಂದನಾ ಕೋದಂಡ ಅವರು ನಡೆಸುತ್ತಿದ್ದ ಕುಚಿಪುಡಿ ತರಗತಿಗಳಿಗೆ ನಮ್ಮ ಪರಿಚಯದ ಹಲವರ ಮಕ್ಕಳು ಹೋಗುತ್ತಿದ್ದದ್ದು ತಿಳಿದು, ನಮ್ಮ ಮಗಳನ್ನೂ ಸೇರಿಸಿದೆವು. ಅಭಿನಂದನಾ ಅವರು ಮಕ್ಕಳೊಂದಿಗೆ ನಡೆದುಕೊಳ್ಳುತ್ತಿದ್ದ ರೀತಿ, ಶಿಸ್ತು, ಕಲಿಸುವ ಶೈಲಿ ಇವೆಲ್ಲ ಕ್ರಮೇಣ ನಮಗೂ, ಮುಖ್ಯವಾಗಿ ಮಗಳಿಗೂ ಮೆಚ್ಚುಗೆಯಾಗಿ ಅವಳ ಕಲಿಕೆ ನಿಲ್ಲದೆ ಮುಂದುವರೆಯಿತು. ವರ್ಷದಲ್ಲಿ ಹಲವಾರು ಚಿಕ್ಕಪುಟ್ಟ ಪ್ರದರ್ಶನಗಳೊಂದಿಗೆ ಶುರುವಾಗಿದ್ದು ಅದೊಂದು ನಮ್ಮ ಜೀವನಕ್ರಮವೇ ಆಗಿಹೋಯಿತೆನ್ನಬಹುದು. ವಾರದ ತರಗತಿಗಳು ಅಷ್ಟೇ ಅಲ್ಲದೇ ಸಂಕ್ರಾಂತಿ, ೨೬ ಜನವರಿಯ ಗಣತಂತ್ರ ದಿವಸ, ಯುಗಾದಿ, ೧೫ ಆಗಸ್ಟ್, ದೀಪಾವಳಿ, ಹೊಸ ವರ್ಷ ಹೀಗೆ ಅನೇಕ ಕಾರ್ಯಕ್ರಮಗಳಿಗೆ ತಯಾರಿ ನಮ್ಮನ್ನೂ, ಮಕ್ಕಳನ್ನೂ ವಾರಾಂತ್ಯದಲ್ಲಿ ಸಮಯವೇ ಇಲ್ಲದಂತೆ ಇಟ್ಟವು. ಎಲ್ಲ ಪಾಲಕರಂತೆ ನಮ್ಮ ಜೀವನದ ಪರಿಕ್ರಮಣವೂ ಮಕ್ಕಳ ಚಟುವಟಿಕೆಗಳ ಸುತ್ತಲೇ ಸುತ್ತುವಂತಾಯಿತು. ಹೀಗಿದ್ದರೂ, ಪ್ರತಿಯೊಂದು ಕಾರ್ಯಕ್ರಮದ ಯಶಸ್ಸು ನಮ್ಮ ಹೆಮ್ಮೆಯನ್ನು ಹೆಚ್ಚಿಸಿತೆಂದೇ ಹೇಳಬಹುದು.

ಕುಚಿಪುಡಿಯ ನೃತ್ಯ ಪ್ರಕಾರದಲ್ಲಿ, ವಿದ್ಯಾರ್ಥಿಗೆ ಮೊದಲಿನಿಂದ ಕಾಲ್ಗೆಜ್ಜೆ ದೊರೆಯದು. ಅದನ್ನು ವಿದ್ಯಾರ್ಥಿ ಗಳಿಸಬೇಕು. ಅಂದರೆ, ಒಂದು ಹಂತ ತಲುಪಿದಾಗ ಮಕ್ಕಳಿಗೆ ಗುರುವಿನಿಂದ ಗೆಜ್ಜೆ ಕಟ್ಟಿಸಲಾಗುತ್ತದೆ, ನಟರಾಜನ ಪೂಜೆಯೊಂದಿಗೆ. ಇದುವರೆಗೆ ಗುಂಪಿನಲ್ಲಿ ನಾಟ್ಯಪ್ರದರ್ಶನ ಮಾಡಿದ್ದ ವಿದ್ಯಾರ್ಥಿ, ಮೊದಲ ಬಾರಿಗೆ ಸ್ಪಾಟ್‍ಲೈಟ್‍ನಲ್ಲಿ ಬರುತ್ತಾರೆ; ಸೋಲೋ ನೃತ್ಯ ಮಾಡುತ್ತಾರೆ; ಮಾಡಬಲ್ಲೆನೆಂಬ ಆತ್ಮಸ್ಥೈರ್ಯ ಗಳಿಸುತ್ತಾರೆ. ನಾನು ನೋಡಿದಂತೆ, ಮಕ್ಕಳು ನೃತ್ಯದ ಬಗ್ಗೆ ಹೆಚ್ಚು ಗಮನ ಕೊಡುವುದು ಅಲ್ಲಿಂದಲೇ. ಅಲ್ಲಿಂದ ಪ್ರತಿ ಹಾವ-ಭಾವದಲ್ಲಿ, ಪ್ರತಿಯೊಂದು ಪ್ರದರ್ಶನದಲ್ಲಿ ಮನಸುಕೊಟ್ಟು ಮಾಡಿದ ಪ್ರಯತ್ನದ ಫಲ ಕಾಣಲು ಶುರುವಾಗುತ್ತದೆ.

ಅಲ್ಲಿಂದ ಮುಂದಿನ ಹಂತ ರಂಗಪ್ರವೇಶದ್ದು. ಭರತನಾಟ್ಯದಿಂದಾಗಿ ಆರಂಗೇಟ್ರಮ್ ಎಂದು ಹೆಚ್ಚು ಪ್ರಚಲಿತವಾಗಿರುವ ಈ ಹಂತ, ವಿದ್ಯಾರ್ಥಿಯ ಕಲಿಕೆ ಪೂರ್ಣವಾಯಿತು ಅನ್ನುವುದಕ್ಕೆ ಸಮ. ಸುಮಾರು ೩ ಗಂಟೆಗಳ ಕಾಲ ನಡೆಯುವ ಈ ಕಾರ್ಯಕ್ರಮ ವಿದ್ಯಾರ್ಥಿಯ ಪರಿಶ್ರಮವನ್ನು ಒರೆಗೆ ಹಚ್ಚುತ್ತದೆ. ಲೈವ್ ಹಾಡುಗಾರ ಮತ್ತು ಸಂಗೀತಗಾರರೊಂದಿಗೆ ನಡೆಯುವ ನೃತ್ಯ ವಿದ್ಯಾರ್ಥಿಯನ್ನು, ಅಲ್ಲಾಗಬಹುದಾದ ಹೆಚ್ಚು-ಕಡಿಮೆಗಳಿಗೆ ಹೊಂದಿಕೊಂಡು ಕಾರ್ಯಕ್ರಮವನ್ನು ಸರಿಯಾಗಿ ನಡೆಸಿ, ಮುಗಿಸುವ ಚಾಣಾಕ್ಷತೆಯನ್ನು ಕಲಿಸುತ್ತದೆ. ಕಾರ್ಯಕ್ರಮಕ್ಕೆ ಸುಮಾರು ೧೦-೧೨ ತಿಂಗಳ ಮುಂಚೆ ಆರಂಭವಾಗುವ ರಂಗಪ್ರವೇಶದ ತಯಾರಿ, ವಿದ್ಯಾರ್ಥಿ ಮತ್ತು ಗುರು ಇಬ್ಬರ ಸಮಯ, ಸಾಮರ್ಥ್ಯ ಎರಡರಲ್ಲೂ ಸಂಪೂರ್ಣ ಹೊಂದಾಣಿಕೆ, ತಾಳ್ಮೆ ಮತ್ತು ಸಮರ್ಪಣೆಯನ್ನು ನಿರೀಕ್ಷಿಸುತ್ತದೆ. ಪಾಲಕರಿಗೆ ಇದೊಂದು ಸಣ್ಣ ಪ್ರಮಾಣದಲ್ಲಿ ಮದುವೆಯನ್ನೇ ಮಾಡಿದ ಅನುಭವ – ತಯಾರಿ, ಖರೀದಿ ಎಲ್ಲದರಲ್ಲೂ. ಕೊನೆಯ ವಾರವಂತೂ, ದಿನಕ್ಕೆ ೮-೧೦ ಗಂಟೆಗಳ ಕಾಲ ಸಂಗೀತಗಾರರೊಂದಿಗೆ ನಡೆಯುವ ನೃತ್ಯದ ಅಭ್ಯಾಸ ನೋಡುವ ಪಾಲಕರಿಗೇ ಬೆವರಿಳಿಸುತ್ತದೆ! ಎಲ್ಲ ಯಶಸ್ವಿಯಾಗಿ ಮುಗಿದು, ನೆರೆದ ಪ್ರೇಕ್ಷಕವೃಂದದ ಚಪ್ಪಾಳೆಗಳನ್ನು ಕೇಳಿದಾಗ ಆಗುವ ಹೆಮ್ಮೆಯ ಅನುಭವ ಬರೆದು ಹೇಳಿ ವರ್ಣಿಸಲಾಗದು.

ಮೇಲಿನ ಎರಡು ಹಂತಗಳಲ್ಲೂ ಒಬ್ಬೊಬ್ಬಳು ಮಗಳು ಇರುವ ನಮಗೆ, ಈಗ ಕುಚಿಪುಡಿಯಿಲ್ಲದ ವಾರ ಏನೆಂದೇ ನೆನಪಿಲ್ಲ. ಯೂನಿವರ್ಸಿಟಿಯಲ್ಲಿರುವ ದೊಡ್ಡ ಮಗಳು ಕಲಿತ ವಿದ್ಯೆಯನ್ನು ಉತ್ಸಾಹದಿಂದ ಅಲ್ಲೂ ಪ್ರದರ್ಶನ ಮಾಡುತ್ತಿದ್ದಾಳೆ. ಕುಚಿಪುಡಿ ಕಲಿಸಿದ ಶಿಸ್ತು, ಏಕಾಗ್ರತೆಯ ಅರಿವು ಜೀವನಕ್ಕೆ ಎಷ್ಟು ಉಪಯುಕ್ತ ಎನ್ನುವ ಅರಿವು ಅವಳಿಗಿದೆ. ಇದಕ್ಕೆ ಕಾರಣವಾದ ಗುರು ಶ್ರೀಮತಿ ಅಭಿನಂದನಾ ಕೋದಂಡ ಮತ್ತು ಅವರು ನಡೆಸುವ ಅಭಿನಂದನಾ ಡಾನ್ಸ್ ಅಕ್ಯಾಡೆಮಿಗೆ ನಮ್ಮ ಧನ್ಯವಾದಗಳು.

ಅಭಿನಂದನಾ ಡಾನ್ಸ್ ಅಕ್ಯಾಡೆಮಿ (ADA):
ಸಧ್ಯಕ್ಕೆ ಇಂಗ್ಲೆಂಡಿನಲ್ಲಿ ಮುಂಚೂಣಿಯಲ್ಲಿರುವ ಭಾರತೀಯ ಶಾಸ್ತ್ರೀಯ ನಾಟ್ಯ ಕಲಿಸುವ ಶಾಲೆಗಳಲ್ಲಿ ಒಂದು. ೨೦೦೭ರಲ್ಲಿ ಆರಂಭವಾದ ಈ ಶಾಲೆ ತನ್ನ ಶಿಸ್ತು ಮತ್ತು ಕಲಿಕೆಯ ವಿಧಾನದಿಂದಾಗಿ ಹಿರಿಮೆಯನ್ನು ಕಾಯ್ದುಕೊಂಡು ಬಂದಿದೆ. ದಕ್ಷಿಣ ಭಾರತದ ಆಂಧ್ರಪ್ರದೇಶದಲ್ಲಿ ತನ್ನ ಬೇರುಗಳನ್ನು ಹೊಂದಿರುವ ಕುಚಿಪುಡಿ ನೃತ್ಯವನ್ನು ಕಲಿಸುವ ಈ ಶಾಲೆ, ವಾಯವ್ಯ ಇಂಗ್ಲಂಡಿನ ಲ್ಯಾಂಕಶಾಯರ್‌ನ ವಿವಿಧ ಭಾಗಗಳಿಂದ ಬರುವ ವಿದ್ಯಾರ್ಥಿಗಳನ್ನು ಹೊಂದಿದೆ. ಇಲ್ಲಿನ ವಿದ್ಯಾರ್ಥಿಗಳು ಕಲಿತ ವಿದ್ಯೆಯನ್ನು ದೇಶದಾದ್ಯಂತ ಹಲವಾರು ಪ್ರಮುಖ ವೇದಿಕೆಗಳಲ್ಲಿ ಪ್ರದರ್ಶಿಸಿದ್ದಾರೆ – ಉದಾಹರಣೆಗೆ, ಲಂಡನ್ ಇಂಟರ್ನ್ಯಾಶನಲ್ ಆರ್ಟ್ಸ್ ಫೆಸ್ಟಿವಲ್, ಟೂರ್ ಡಿ ಫ್ರಾನ್ಸ್ ಫೆಸ್ಟಿವಲ್ (ಹ್ಯಾಲಿಫ್ಯಾಕ್ಸ್), ಬ್ಯಾರೊ ಫೆಸ್ಟಿವಲ್ ಆಫ್ ಕಲರ್ಸ್, ಲ್ಯಾಂಕಶಾಯರ್ ಎನ್ಕೌಂಟರ್, ಪ್ರೆಸ್ಟನ್ ಗಿಲ್ಡ್ ಮತ್ತು ಹೌಸ್ ಆಫ್ ಕಾಮನ್ಸ್ ದೀಪಾವಳಿ ಉತ್ಸವ.

ಅಭಿನಂದನಾ ಅಕ್ಯಾಡೆಮಿಯ ಮೂಲಮಂತ್ರ ಸಂಪ್ರದಾಯಬದ್ಧ ಕುಚಿಪುಡಿ ನಾಟ್ಯವನ್ನು ಕಲಿಸುವ, ಈ ನೆಲದಲ್ಲಿ ಬೆಳೆಸುವ ಅವಿಚ್ಚಿನ್ನ ಆಶಯ. ವಿದ್ಯಾರ್ಥಿಗಳನ್ನು ಥಿಯರಿ ಮತ್ತು ಪ್ರಾಕ್ಟಿಕಲ್‍ಗಳೆರಡರಲ್ಲೂ ಪ್ರವೀಣರನ್ನಾಗಿಸುವ ಅವಿರತ ಪ್ರಯತ್ನ. ೧೫ ವರ್ಷಗಳಿಂದ ಕಲಿಯುತ್ತಿರುವ ಮೊದಲೆರಡು ತರಗತಿಗಳ ವಿದ್ಯಾರ್ಥಿನಿಯರು ಕಳೆದ ಹಲ ವರ್ಷಗಳಲ್ಲಿ ತಮ್ಮ ರಂಗಪ್ರವೇಶವನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಪ್ರತಿಯೊಂದು ರಂಗಪ್ರವೇಶದಲ್ಲೂ ಇದ್ದಂತಹ ಕಾಮನ್ ಫ್ಯಾಕ್ಟರ್ ಅಂದರೆ ಲಂಡನ್ನಿನಿಂದ ಬರುವ ಕರ್ನಾಟಿಕ್ ಸಂಗೀತಗಾರರು – ಹಾಡುಗಾರ ಶ್ರೀ ವಂಶೀಕೃಷ್ಣ ವಿಷ್ಣುದಾಸ್, ವೇಣುವಾದಕ ಶ್ರೀ ವಿಜಯ ವೆಂಕಟ ಮತ್ತು ಮೃದಂಗ ವಾದಕ ಶ್ರೀ ಪ್ರತಾಪ ರಾಮಚಂದ್ರ. ಈ ಮೂವರ ಸಂಗತಿ ರಂಗಪ್ರವೇಶದ ಕಾರ್ಯಕ್ರಮಕ್ಕೆ ಖಳೆ ತರುವುದರಲ್ಲಿ ಸಂದೇಹವೇ ಇಲ್ಲ.

ಕೆಳಗೆ ಕೊಟ್ಟಿರುವ ಹಲವು ಲಿಂಕುಗಳಲ್ಲಿ ವಿದ್ಯಾರ್ಥಿನಿಯರ ಇತ್ತೀಚಿನ ಕಾರ್ಯಕ್ರಮದ ಪಟಚಿತ್ರಗಳೂ, ಯುಟ್ಯೂಬ್ ಲಿಂಕ್ ಇವೆ. ಮಿತ್ರ ರಾಮಶರಣ ಬರೆದಿದ್ದ ನನ್ನ ಮಗಳು ಅದಿತಿಯ ರಂಗಪ್ರವೇಶದ ವಿವರಣೆಯನ್ನೂ ನೋಡಬಹುದು.

ಶೀಮತಿ ಅಭಿನಂದನಾ ಕೋದಂಡ:
ಆಭಿನಂದನಾ ಅವರೊಬ್ಬ ಅತ್ತ್ಯುತ್ತಮ ಕಲಾವಿದೆ, ನೃತ್ಯಸಂಯೋಜಕಿ ಮತ್ತು ಕಲಾನಿರ್ದೇಶಕಿ. ಭಾರತದಲ್ಲಿ ಹೆಸರಾಂತ ಗುರುಗಳಾದ ಶ್ರೀ ಪಸುಮರ್ತಿ ವೆಂಕಟೇಶ್ವರ ಶರ್ಮ, ಶ್ರೀ ವೇದಾಂತಂ ರಾಘವ ಮತ್ತು ಪದ್ಮಭೂಷಣ ಡಾ. ವೆಂಪಟಿ ಚಿನ್ನ ಸತ್ಯಮ್ ಅವರೊಂದಿಗೆ ಕಲಿತಿದ್ದಾರೆ, ಕೆಲಸ ಮಾಡಿದ್ದಾರೆ. ಎಂಟು ನೂರಕ್ಕೂ ಹೆಚ್ಚು ಪ್ರದರ್ಶನಗಳನ್ನು ನೀಡಿದ ಹೆಗ್ಗಳಿಕೆ ಅವರದು. ದೂರದರ್ಶನ, ಈ-ಟಿವಿ, ಸ್ಟಾರ್ ಪ್ಲಸ್, ಜೆಮಿನಿ ಟಿವಿ ಮುಂತಾದ ಹಲವಾರು ಚಾನಲ್‍ಗಳಲ್ಲಿ ಇವರ ನೃತ್ಯಗಳು ಪ್ರದರ್ಶಿತವಾಗಿವೆ. ಭಾರತ, ಯುನೈಟೆಡ್ ಕಿಂಗ್‍ಡಮ್ ಮತ್ತು ಅಮೆರಿಕಗಳಲ್ಲಿ ಪ್ರದರ್ಶನ ಮತ್ತು ಕಮ್ಮಟಗಳನ್ನ ನಡೆಸಿಕೊಟ್ಟಿದ್ದಾರೆ. ತಮ್ಮ ಪ್ರತಿಭೆ ಮತ್ತು ಕೊಡುಗೆಗೆ ಹಲವಾರು ಬಾರಿ ಪ್ರಶಸ್ತಿ ಮತ್ತು ಬಿರುದು ಗಳಿಸಿದ್ದಾರೆ (Indian National Award for dance, Outstanding Young Person, Ugaadi puraskaar, Yuva Tarang puraskaar, Woman of the Future award to name a few). ದಿ. ಶ್ರೀ ಪಿ ವಿ ನರಸಿಂಹ ರಾವ್, ದಿ. ಶ್ರೀ ಅಬ್ದುಲ್ ಕಲಾಮ್ ಆಜಾದ್ ಮುಂತಾದವರಿಂದ ಸನ್ಮಾನಿತರಾಗಿದ್ದಾರೆ.

ಎಮ್ ಬಿ ಎ ಪದವೀಧರೆಯಾಗಿರುವ ಅಭಿನಂದನಾ ಪ್ರೆಸ್ಟನ್ನಿನ ಗುಜರಾತ್ ಹಿಂದು ಸೊಸೈಟಿಯ ಮಂದಿರದಲ್ಲಿ ಮುಖ್ಯಸ್ಥೆಯಾಗಿ ದಿನದ ಕೆಲಸ ಮಾಡುತ್ತಾರೆ. ಇವರ ಯಶಸ್ಸಿನ ಹಿಂದೆ ಪತಿ ಡಾ. ಪ್ರಫುಲ್ ಅವರ ಸಂಪೂರ್ಣ ಸಹಕಾರ ಇರುವುದು ವಿದಿತ.

ಕೈಬೆರಳಿಂದ ಎಣಿಸಬಹುದಾದಷ್ಟು ವಿದ್ಯಾರ್ಥಿಗಳೊಂದಿಗೆ ಅಭಿನಂದನಾ ಅವರ ಮನೆಯಲ್ಲಿ ಶುರುವಾದ ಈ ಶಾಲೆಯ ಸಸಿ ಈಗ ನೂರಕ್ಕೂ ಹೆಚ್ಚು ಮಕ್ಕಳೊಂದಿಗೆ ಬೆಳೆದು ಹೆಮ್ಮರವಾಗಿದೆ. ಹೊಸ ಪೀಳಿಗೆಯ ಯುವ ನಾಟ್ಯಗಾತಿಯರ ಪ್ರದರ್ಶನ ನೋಡಿದಾಗ ಪಾಲಕರ, ವಿದ್ಯಾರ್ಥಿಗಳ ಮತ್ತು ಗುರುವಿನ ಶ್ರಮ ಖಂಡಿತ ಫಲ ಕೊಡುತ್ತಿವೆ ಅನ್ನಿಸುತ್ತದೆ. ಕಾರಣಾಂತರಗಳಿಂದ ನಮಗಿರದ ಅವಕಾಶಗಳು ಮಕ್ಕಳಿಗೆ ದೊರೆತು, ಅವರ ಕನಸು ನನಸಾಗುವುದನ್ನು ನೋಡುವ ನಮ್ಮ ಆಸೆ ಪೂರೈಸುತ್ತಿದೆ. ಇದು ಹೀಗೆಯೇ ಮುಂದುವರೆಯಲಿ ಎಂದು ಹಾರೈಸುವಾ.

- ಲಕ್ಷ್ಮೀನಾರಾಯಣ ಗುಡೂರ.

*********************************

ಗುರು ಶ್ರೀಮತಿ ಅಭಿನಂದನಾ ಕೋದಂಡ

********************************

ಶುಭ ಶುಕ್ರವಾರ (Good Friday) ಪ್ರಯುಕ್ತ ಪ್ರಸಾದ್ ನಂಜನಗೂಡು ಅವರು ರಚಿಸಿರುವ ಕವನ.

ಶುಭ ಶುಕ್ರವಾರ

ಮೇರಿ-ಜೋಸೆಫರ ಮುದ್ದು ಕುವರ
ಯೇಸು ಕ್ರಿಸ್ತ ನೀ ಅಜರಾಮರ

ಭುವಿಗೆ ಇಳಿದೆ ನೀ ಬೆತ್ಲೆಹೇಮಿನಲಿ
ನಡು ರಾತ್ರಿಯ ನೀರವದಿ
ಸತ್ಯವನರಸುತ ದೇಶವ ಸುತ್ತಿದೆ
ಸುವಾರ್ತೆ ನುಡಿದೆ ಸರಳದಲಿ

ತನ್ನಂತೆಯೇ ನೆರೆಯವರನ್ನು
ಪ್ರೀತಿಯಿಂದಲೇ ಕಾಣೆಂದೆ
ಒಂದು ಕೆನ್ನೆಗೆ ಹೊಡೆದವರಿಗೆ ನೀ
ಇನ್ನೊಂದು ಕೆನ್ನೆಯ ತೋರೆಂದೆ

ಶಿಲುಬೆಗೆ ಏರಿಸಿದವರಾ ಪಾಪವ
ಮನ್ನಿಸಿಬಿಡೆಂದ ಶಾಂತಿದೂತ
ಹಿಂಸಿಸಿದವರ ರೋಮ್ ನಗರವ
ಪುನೀತಗೊಳಿಸಿದ ಪವಾಡ ಪುರುಷ

ಕರ್ತನ ವಚನವ ಪಾಲನೆ ಮಾಡಲು
ಭಯ ಆಮಿಷಗಳು ಬೇಕಿಲ್ಲ
ಕ್ರಿಸ್ತನ ಪ್ರೀತಿ ಸಂದೇಶವ ಸಾರಲು
ವಿದ್ಯಾ-ವೈದ್ಯ ಸೇವೆಗಿಂತಿಲ್ಲಾ !

- ಪ್ರಸಾದ್ ನಂಜನಗೂಡು

*******************************