ಎರಡು ಕವನಗಳು ಮತ್ತು ಒಂದು ಲೇಖನ – ಕೇಶವ ಕುಲಕರ್ಣಿ

ನೋಡೂಣಂತ

(AI generated image)

ಕೇಳೀನಿ ಮಂದಿ ಅಕಿನ್ನ ಕಣ್ಣ ಪಿಳಕಿಸದs ನೋಡ್ತಾರಂತ
ಹಂಗಾರ ಈ ಊರಾಗ ನಾಕಾರ ದಿನ ಇದ್ದು ನೋಡೂಣಂತ

ಕೇಳೀನಿ ಸೋತವ್ರು ನೊಂದವ್ರಂದ್ರ ಅಕಿ ಕರುಳ ಕರಗತದಂತ
ಹಂಗಾರ ಮನಿ ಮಠಾ ಕಳಕೊಂಡು ಹಾಳಾಗಿ ಹೋಗೂಣಂತ

ಕೇಳೀನಿ ಅಕಿ ನೋಟದಾಗ ಪ್ರೀತಿ ತುಂಬೇತಂತ
ಹಂಗಾರ ಅಕಿ ಮನಿ ಮುಂದ ಫಿರಕಿ ಹೊಡ್ಯೂಣಂತ

ಕೇಳೀನಿ ಅಕಿಗೆ ಹಾಡು ಕವನ ಭಾಳ ಸೇರ್ತಾವಂತ
ಹಂಗಾರ ಒಂದು ಕವನ ಬರದು ಹಾಡೇ ಬಿಡೂಣಂತ

ಕೇಳೀನಿ ಅಕಿ ಮಾತಾಡಿದ್ರ ಮಲ್ಲಿಗಿ ಉದರತಾವಂತ
ಹಂಗಾರ ತಡಾ ಯಾಕ ಮಾತಾಡಿಸಿಯೇ ತೀರೂಣಂತ

ಕೇಳೀನಿ ಅಕಿ ತುಟಿ ಕಂಡ್ರ ಗುಲಾಬಿಗೆ ಹೊಟ್ಟೆಕಿಚ್ಚಂತ
ಹಂಗಾರ ವಸಂತ ಮಾಸದ ಮ್ಯಾಲ ಕಟ್ಲೇ ಹಾಕೂಣಂತ

ಕೇಳೀನಿ ಅಕಿ ನೋಡಿದ್ರ ಸಾಕು ಮಂದಿಗೆ ಹುಚ್ಚ ಹಿಡಿತದಂತ
ಹಂಗಾರ ಹುಚ್ಚರೊಳಗ ದೊಡ್ಡ ಹುಚ್ಚಾಗಿ ಕುಣ್ಯೂಣಂತ

(ಅಹಮದ್ ಫರಾಜ್ ಬರೆದ `ಸುನಾ ಹೈ ಲೋಗ್ ಉಸೆ ಆಂಖ್ ಭರ್ ಕೆ ದೇಖತೇ ಹೈಂ` ಎನ್ನುವ ಹಾಡು ಓದುತ್ತ ಕೇಳುತ್ತ ನನಗೆ ತಿಳಿದಂತೆ ಕೆಲವು ಸಾಲುಗಳನ್ನು ಭಾವಾನುವಾದ ಮಾಡುವಾಗ ಮೂಡಿದ್ದು)

ಆ ಕತೆಯನ್ನು ತಿನ್ನಲು ಬಿಡಬಾರದಿತ್ತು

(AI generated image)

ನಾನು ಬರೆದ ಆ ಕತೆಯನ್ನು ತಿಂದಳು
ಆ ಕತೆ ತಿಂದಾದ ಮೇಲೆ ನಾ ಬರೆದ
ಎಲ್ಲ ಕವನಗಳನ್ನೂ ಟಿಪ್ಪಣೆಗಳನ್ನೂ
ನನ್ನ ಟೇಬಲ್ಲನ್ನೂ ಸ್ವಚ್ಛ ಮಾಡಿದಳು

ನಾನು ಅವಳನ್ನು ತಡೆಯಹೋದೆ
ನಕ್ಕು ಕಣ್ಣು ಮಿಟುಕಿಸದಳು

ಗೋಡೆಗೆ ಹಾಕಿದ್ದ ಪೋಸ್ಟರುಗಳನ್ನು ಹರಿದಳು
ಸ್ಟಿಕಿ ನೋಟ್ಸುಗಳನ್ನು ಬೀಸಾಕಿದಳು
ನನ್ನ ಬಳಿಯಿದ್ದ ಎಲ್ಲ ಪುಸ್ತಕಗಳನ್ನು
ಗೋಣೀಚೀಲದಲ್ಲಿ ತುಂಬಿ ಕಸದ ತೊಟ್ಟಿಗೆಸೆದಳು

ನಾನು ಅವಳನ್ನು ತಡೆಯಹೋದೆ
ಕೈ ಸವರಿ ಮಾತಿಗಿಳಿದಳು

ನನ್ನ ಎಲ್ಲ ಪಾಸ್ವರ್ಡ್ ಪಡೆದಳು
ನನ್ನ ಬರವಣಿಗೆಯ ಫೈಲುಗಳನ್ನು
ನನ್ನ ಸಾಹಿತ್ಯದ ಗೆಳೆಯರ ಕಾಂಟ್ಯಾಕ್ಟ್ ನಂಬರುಗಳನ್ನು
ಎಲ್ಲ ಸೋಷಿಯಲ್ ಮೀಡಿಯಾಗಳನ್ನು ಅಳಿಸಿದಳು

ನಾನು ಅವಳನ್ನು ತಡೆಯಹೋದೆ
ಕೆನ್ನೆಗೆ ಕೆನ್ನೆ ಕೊಟ್ಟು ಸೆಲ್ಫಿ ತೆಗೆದಳು

ನನ್ನ ಹಳೆಬಟ್ಟೆಗಳನ್ನು ಬೀಸಾಕಿ
ಹೊಸ ಬಟ್ಟೆಗಳ ತಂದಳು
ಗಡ್ಡ ತಲೆಗಳ ಟ್ರಿಮ್ ಮಾಡಿದಳು
ಹೊಸ ಶ್ಯಾಂಪೂ ಪರ್ಫ್ಯೂಮು ತಂದಳು

ನಾನು ಅವಳನ್ನು ತಡೆಯಹೋದೆ
ಗಟ್ಟಿಯಾಗಿ ತಬ್ಬಿ ಚುಂಬಿಸಿದಳು

ಕಿಟಕಿಗೆ ಹೊಸ ಕರ್ಟನ್ನುಗಳನ್ನು ಹಾಕಿ
ನನ್ನ ಕೋಣೆಯ ಬಾಗಿಲಿಗೆ ಅಗುಳಿ ಹಾಕಿದಳು
ಮಲಗುವ ಮಂಚವನ್ನು ಗಟ್ಟಿಗೊಳಿಸಿ
ಹೊಸ ಗಾದೆ ದಿಂಬು ಹಾಕಿದಳು

ನಾನು ಇನ್ನು ತಡೆಯದಾದೆ
ಅವಳ ದೇಹದಲ್ಲಿ ಲೀನವಾದೆ

ಅವಳನ್ನು ನನ್ನ ಕೋಣೆಗೆ ಬಿಟ್ಟುಕೊಡಬಾರದಿತ್ತು
ಬಂದಿದ್ದರೂ ಆ ಕತೆಯನ್ನು ತಿನ್ನಲು ಬಿಡಬಾರದಿತ್ತು
ಅವಳು ತಿಂದ ಆ ಕತೆಯ ಹೆಸರು,
`ನನಗೆಂಥ ಹುಡುಗಿ ಬೇಕು?`

ನಾನು ಕತೆ ಕವನ ಬರೆಯುವುದನ್ನು ಬಿಟ್ಟು
ಈಗ ಹದಿನೈದು ವರ್ಷಗಳಾದವು

ವೈದ್ಯಕೀಯದಲ್ಲಿ ಕೃತಕ ಬುದ್ಧಿಮತ್ತೆ: ಭರವಸೆ ಮತ್ತು ಅಪಾಯ

(AI generated image)

ಕಾಡುಗಳಲ್ಲಿ ಅಲೆಯುತ್ತಿದ್ದ ಮನುಷ್ಯ ವ್ಯವಸಾಯವನ್ನು ಆರಂಭಿಸಲು ಲಕ್ಷಾಂತರ ವರ್ಷಗಳು ಬೇಕಾದವು. ವ್ಯವಸಾಯದ ಕ್ರಾಂತಿಯಿಂದ ಕೈಗಾರಿಕಾ ಕ್ರಾಂತಿಯಾಗಲು ಸಾವಿರಾರು ವರ್ಷಗಳು ಬೇಕಾದವು. ಕೈಗಾರಿಕಾ ಕ್ರಾಂತಿಯಿಂದ ಕಂಪ್ಯೂಟರ್ ಕ್ರಾಂತಿಯಾಗಲು ಕೆಲವೇ ನೂರು ವರ್ಷಗಳು ಸಾಕಾದವು. ಕಂಪ್ಯೂಟರ್ ಕ್ರಾಂತಿಯಿಂದ ಸ್ಮಾರ್ಟ್ ಫೋನ್ ಕ್ರಾಂತಿಯಾಗಲು ಕೆಲವೇ ದಶಕಗಳು! ಸ್ಮಾರ್ಟ್-ಫೋನ್ ಕ್ರಾಂತಿಯಾಗಿ ಇನ್ನೂ ಎರಡು ದಶಕಗಳು ಪೂರ್ತಿ ಮುಗಿದಿಲ್ಲ, ಕೃತಕ ಬುದ್ಧಿಮತ್ತೆಯ ಕ್ರಾಂತಿ ಆರಂಭವಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಬಿರುಗಾಳಿಯನ್ನು ಎಬ್ಬಿಸಿದೆ. ವೈದ್ಯಕೀಯ ಕ್ಷೇತ್ರವೂ ಇದಕ್ಕೆ ಹೊರತಲ್ಲ.

ಕೃತಕ ಬುದ್ಧಿಮತ್ತೆಯನ್ನು ಸಾಮಾನ್ಯ ಜನರಿಗೆ ಪರಿಚಯಿಸುವಲ್ಲಿ ಮುಖ್ಯ ಪಾತ್ರ ಚಾಟ್-ಜಿಪಿಟಿಯದು. ಅದಕ್ಕಿಂತೆ ಮೊದಲಿನಿಂದಲೇ ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಢಿಮತ್ತೆಯ ತಂತ್ರಜ್ಞಾನವನ್ನು ತರುವ ಪ್ರಯತ್ನಗಳು ಬಹಳಷ್ಟು ನಡೆದರೂ, ಚಾಟ್-ಜಿಪಿಟಿ ಬಂದ ಮೇಲೆ ವಿಜ್ಞಾನಿಗಳ, ವೈದ್ಯರ ಮತ್ತು ವೈದ್ಯಕ್ಷೇತ್ರಕ್ಕೆ ನೆರವಾಗುವ ಎಲ್ಲ ಉದ್ಯಮಗಳಲ್ಲಿ ಕೃತಕ ಬುದ್ಧಿಮತ್ತೆಯ ಮೇಲಿನ ಗಮನ ಹೆಚ್ಚಾಗಿದೆ. ಇನ್ನೂ ಅಂಬೆಗಾಲಿಡುತ್ತಿರುವ ಕೃತಕ ಬುದ್ಧಿಮತ್ತೆಯ ಬಹುಮುಖಿ ಸ್ವರೂಪಗಳು, ಅದರ ಭರವಸೆಗಳು, ಅಪಾಯಗಳು ಮತ್ತು ಸಂಭಾವ್ಯ ಮಾರ್ಗಗಳನ್ನು ವೈದ್ಯಕೀಯದ ನಿಟ್ಟಿನಲ್ಲಿ ಪರಿಶೀಲಿಸುವುದು ಈ ಲೇಖನದ ಉದ್ದೇಶ.

ಯಂತ್ರಕಲಿಕೆ ಮತ್ತು ಆಳಕಲಿಕೆಗಳು ಕೃತಕ ಬುದ್ಢಿಮತ್ತೆಯ ಕೇಂದ್ರಬಿಂದುಗಳು. ಸಾಮಾನ್ಯ ಮನುಷ್ಯನು ಮಾತನಾಡುವ ಭಾಷೆಯನ್ನು ಅರ್ಥ ಮಾಡಿಕೊಂಡು ಅದನ್ನು ತನ್ನ ಕಲಿಕೆಗೆ ಅಳವಡಿಕೊಳ್ಳುವುದು ಅದರ ಇನ್ನೊಂದು ರೀತಿ. ವೈದ್ಯರ ತಾಂತ್ರಿಕ ಭಾಷೆಯನ್ನು ಮತ್ತು ಸಂಕೀರ್ಣ ರೋಗನಿದಾನವನ್ನು ವೈದ್ಯರ ಟಿಪ್ಪಣೆಗಳನ್ನು ಓದಿ ಅರ್ಥ ಮಾಡಿಕೊಂಡು ತನ್ನ ಬುದ್ಧಿಮತ್ತೆಯನ್ನು ಹೆಚ್ಚಿಸುತ್ತ ಹೋಗುವುದು ಈ ಕೃತಕ ಬುದ್ಢಿಮತ್ತೆಯ ಕೆಲಸ. ಜೊತೆಗೆ ರೋಬೋಟಿಕ್ಸ್ ಯಂತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗೆ ಕೃತಕ ಬುದ್ಢಿಮತ್ತೆಯ ಮೆದುಳನ್ನುಅಳವಡಿಸುವುದು ಮುಂದಿನ ಹಂತ.

ಕೃತಕ ಬುದ್ಢಿಮತ್ತೆಯ ಸಂಶೋಧಕರಾದ ಡಾ. ಫೀ-ಫೀ ಲಿ, “ಕೃತಕ ಬುದ್ಢಿಮತ್ತೆಯು ಮಾನವನ ಬುದ್ಧಿಮತ್ತೆಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ ಮತ್ತು ನಮ್ಮ ಜಗತ್ತು ಎದುರಿಸುತ್ತಿರುವ ಕೆಲವು ಸವಾಲುಗಳನ್ನು ಪರಿಹರಿಸುವ ಸಾಮರ್ಥ್ಯವನ್ನು ಹೊಂದಿದೆ,” ಎಂದು ಹೇಳುತ್ತಾರೆ. ವೈದ್ಯಕೀಯ ಕ್ಷೇತ್ರದ ಸಕಲ ಅಂಕಿ-ಅಂಶಗಳನ್ನು (ಡೇಟಾ) ಜಾಲಾಡಿಸಿ, ಸೋಸಿ, ಅದರಿಂದ ಉಪಯೋಗವಾಗುವ ಸಂಶೋಧನೆಯನ್ನು ಮಾಡಲು ಈಗ ಕಂಪ್ಯೂಟರುಗಳು ಸಹಾಯ ಮಾಡುತ್ತಿದೆ. ಕೃತಕ ಬುದ್ಢಿಮತ್ತೆಯು ಅದರ ಜೊತೆ ಸೇರಿದಾಗ ವೈದ್ಯಕೀಯ ಸಂಶೋಧನೆಗಳು ಬೇಗ ಪೂರ್ಣವಾಗುತ್ತವೆ ಮತ್ತು ಹೆಚ್ಚು ನಿಖರವಾಗಿರುತ್ತವೆ. ದಿನದಿಂದ ದಿನಕ್ಕೆ ನಾವು ಉತ್ಪಾದಿಸುವ ಡೇಟಾಗಳು ಕೋಟಿ ಕೋಟಿ ಗಿಗಾಬೈಟುಗಳಲ್ಲಿ ಬೆಳೆಯುತ್ತಿವೆ. ಆ ಡೇಟಾವನ್ನು ಪ್ರಕ್ರಿಯೆಗೊಳಿಸಲು, ಒರೆಗೆ ಹಚ್ಚಲು, ಹೊಸ ಮಾದರಿಗಳನ್ನು ಗುರುತಿಸಲು, ಹೊಸ ಔಷಧಿಗಳನ್ನು, ಹೊಸ ಶಸ್ತ್ರಚಿಕಿತ್ಸೆಯ ಉಪಕರಣಗಳನ್ನು ತಯಾರಿಸಲು ಕೃತಕ ಬುದ್ಢಿಮತ್ತೆಯು ಸಹಾಯವನ್ನು ಮಾಡುತ್ತಿದೆ.

ಆರೋಗ್ಯ ರಕ್ಷಣೆಯ ಕ್ಷೇತ್ರದಲ್ಲಿ, ಕೃತಕ ಬುದ್ಢಿಮತ್ತೆಯು ರೋಗನಿರ್ಣಯ, ಚಿಕಿತ್ಸಾ ಯೋಜನೆ ಮತ್ತು ವೈಯಕ್ತೀಕರಿಸಿದ ಔಷಧವನ್ನು ಕ್ರಾಂತಿಕಾರಿಗೊಳಿಸುವ ಭರವಸೆಯನ್ನು ಹೊಂದಿದೆ. ಹೃದ್ರೋಗಶಾಸ್ತ್ರಜ್ಞರಾದ ಡಾ. ಎರಿಕ್ ಟೋಪೋಲ್, , “ಬುದ್ಢಿಮತ್ತೆ ಚಾಲಿತ ಅಲ್ಗಾರಿದಮ್‌ಗಳು ವೈದ್ಯಕೀಯ ಚಿತ್ರಗಳನ್ನು ಸರಿಸಾಟಿಯಿಲ್ಲದ ನಿಖರತೆಯೊಂದಿಗೆ ವಿಶ್ಲೇಷಿಸುವ ಸಾಮರ್ಥ್ಯವನ್ನು ಹೊಂದಿವೆ, ರೋಗವನ್ನು ಬಹಳ ಮೊದಲೇ ಪತ್ತೆ ಹಚ್ಚಲು ಮತ್ತು ಮತ್ತು ಹೆಚ್ಚು ರೋಗಿಗಳು ಬೇಗ ಗುಣಮುಖರಾಗಲು ಕಾರಣವಾಗುತ್ತದೆ.”

ವೈದ್ಯಕೀಯದಲ್ಲಿ ಕೃತಕ ಬುದ್ಢಿಮತ್ತೆಯು ರೋಗಪತ್ತೆ, ಚಿಕಿತ್ಸೆ ಮತ್ತು ಔಷಧ ಶೋಧನೆಯಲ್ಲಿ ಪ್ರಗತಿಯನ್ನು ಸಾಧಿಸಿದೆ. ರಕ್ತಪರೀಕ್ಷೆಯ ವಿಶ್ಲೇಷಣೆಯಿಂದ ಹಿಡಿದು ವರ್ಚುವಲ್ ಹೆಲ್ತ್ ಅಸಿಸ್ಟೆಂಟ್‌ಗಳವರೆಗೆ, ಕೃತಕ ಬುದ್ಢಿಮತ್ತೆ ಚಾಲಿತ ಆವಿಷ್ಕಾರಗಳು ರೋಗಿಯ ಅನುಭವಗಳನ್ನು ಮರುರೂಪಿಸುತ್ತಿವೆ ಮತ್ತು ಚಿಕಿತ್ಸೆಯನ್ನು ಹೆಚ್ಚು ನಿಖರವಾಗಿಸುತ್ತಿವೆ. ರೇಡಿಯಾಲಾಜಿ, ಜೀನೋಮಿಕ್ಸ್ ಮತ್ತು ಆರೋಗ್ಯ ದಾಖಲೆಗಳಲ್ಲಿ ಕೃತಕ ಬುದ್ಢಿಮತ್ತೆಯು ಈಗಾಗಲೇ ದೊಡ್ಡ ಸಂಚಲನವನ್ನು ಮಾಡಿದೆ.

ಕೃತಕ ಬುದ್ಢಿಮತ್ತೆಯು ಇಸಿಜಿಯನ್ನು ಓದುತ್ತದೆ. ಸ್ತನ ಕ್ಯಾನ್ಸರ್‌ ಕಂಡುಹಿಡಿಯುವ ಮೆಮೋಗ್ರಾಂನಲ್ಲಿ ಕೃತಕ ಬುದ್ಢಿಮತ್ತೆ ಸಹಾಯಮಾಡುತ್ತಿದೆ. ರಕ್ತಪರೀಕ್ಷೆಗಳನ್ನು ವಿಶ್ಲೇಷಿಸಿ, ವೈದ್ಯರಿಗೆ ರೋಗ ಪತ್ತೆ ಹಚ್ಚಲು ಸಹಾಯ ಮಾಡುತ್ತಿದೆ. ಕ್ಯಾನ್ಸರ್ ರೋಗಿಗಳಿಗೆ ಯಾವ ತರಹದ ಕೀಮೋಥಿರಪಿ ಇರಬೇಕು ಎನ್ನುವುದನ್ನು ನಿರ್ಧರಿಸಲು ಸಹಾಯ ಮಾಡುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಗೂಗಲ್ಲಿನ `ಡೀಪ್ ಮೈಂಡ್`ನ ಕೃತಕ ಬುದ್ಢಿಮತ್ತೆಯು ಕೆಲವು ವಿಷಯಗಳಲ್ಲಿ ನುರಿತವೈದ್ಯರಿಗೇ ಸವಾಲು ಹಾಕಿದೆ. ಬರೀ ಕಣ್ಣಿನ ರೆಟಿನಾದ ಚಿತ್ರವನ್ನು ನೋಡಿ, ವ್ಯಕ್ತಿಯ ವಯಸ್ಸು, ಮಧುಮೇಹ, ಬಿ.ಪಿಗಳ ಬಗ್ಗೆ ನಿಖರ ಮಾಹಿತಿಯನ್ನು ಕೊಡಬಲ್ಲಷ್ಟು ಸಶಕ್ತವಾಗಿದೆ. ಅಷ್ಟೇ ಅಲ್ಲ, ಕೃತಕ ಬುದ್ಢಿಮತ್ತೆಯು ದಿನದ ೨೪ ಗಂಟೆಯೂ ಲಭ್ಯವಿರುತ್ತದೆ, ಅದು ಬೇಸರ ಮಾಡಿಕೊಳ್ಳುವುದಿಲ್ಲ, ಸುಸ್ತಾಗುವುದಿಲ್ಲ.

ಕೈಗಾರಿಕಾ ಕ್ರಾಂತಿಯಾದಾಗ ಹೊಸಯಂತ್ರಗಳು ಹತ್ತು-ನೂರು ಜನರು ಮಾಡುವ ಕೆಲಸವನ್ನು ಒಂದು ಯಂತ್ರ ಮಾಡಲಾರಂಭಿಸಿತು. ಕಂಪ್ಯೂಟರ್ ಕ್ರಾಂತಿಯಾದಾಗ, ಹತ್ತು ಜನ ಗುಮಾಸ್ತರು ಮಾಡುವ ಕೆಲಸವನ್ನು ಒಂದು ಕಂಪ್ಯೂಟರ ಮಾಡಲಾರಂಭಿಸಿತು. ಸ್ಮಾರ್ಟ್-ಫೋನ್ ಯುಗದಲ್ಲಿ ಹತ್ತು ತರಹದ ಸಾಧನಗಳು ಒಂದೇ ಪುಟ್ಟಯಂತ್ರವಾಗಿ ನಮ್ಮ ಸಹಜೀವಿಯಾಗಿ ಹೋಗಿದೆ. ಕೃತಕ ಬುದ್ಢಿಮತ್ತೆಯು ವೈಟ್ ಕಾಲರ್ ಕೆಲಸಗಳನ್ನು, ಬುದ್ಧಿಮತ್ತೆಯ ಕೆಲಸವನ್ನು ಸ್ಥಳಾಂತರಿಸುತ್ತದೆ. ಈ ಭೀತಿಯು ಇನ್ನೂ ದೊಡ್ಡ ಪ್ರಮಾಣದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಕಾಣಿಸಿಕೊಂಡಿರದಿದ್ದರೂ, ಇನ್ನೊಂದು ದಶಕದಲ್ಲಿ ವೈದ್ಯರ ಕೆಲಸಗಳಲ್ಲಿ ಸಾಕಷ್ಟು ಪಲ್ಲಟಗಳಾಗಲಿವೆ.

ಡೇಟಾ ಗೌಪ್ಯತೆ, ಅಲ್ಗಾರಿದಮಿಕ್ ಪಕ್ಷಪಾತ ಮತ್ತು ನೈತಿಕ ಪರಿಣಾಮಗಳ ಬಗ್ಗೆ ಆರೋಗ್ಯ ಕ್ಷೇತ್ರದಲ್ಲಿ ಕಳವಳಕಾರಿ ಸಂಗತಿಗಳಾಗಿವೆ. ಆರೋಗ್ಯದ ಉಪಚಾರದಲ್ಲಿ ಅಸಮಾನತೆಗಳು ಹೆಚ್ಚಾಗುತ್ತವೆ. ರೋಗಿಗಳಿಗೆ `ಮನುಷ್ಯ` ವೈದ್ಯರ ಮೇಲೆ ನಂಬಿಕೆ ಕಡಿಮೆಯಾಗುತ್ತದೆ. ವೈದ್ಯಕೀಯದಲ್ಲಿ ಕೃತಕ ಬುದ್ಢಿಮತ್ತೆಯ ನವೀನ ಸಂಶೋಧನೆಗಳನ್ನು ಬಳಸಿಕೊಳ್ಳುತ್ತಲೇ ನೈತಿಕ ಪರಿಗಣನೆಗಳನ್ನು ಸಮತೋಲನಗೊಳಿಸುವುದು ಅಗತ್ಯವಾಗಿದೆ.

ಕೃತಕ ಬುದ್ಢಿಮತ್ತೆಯ ನೀತಿಶಾಸ್ತ್ರಜ್ಞರಾದ ಟಿಮ್ನಿಟ್ ಗೆಬ್ರು, “ಕೃತಕ ಬುದ್ಢಿಮತ್ತೆಯ ಅಲ್ಗಾರಿದಮ್‌ಗಳಲ್ಲಿ ಪಕ್ಷಪಾತವನ್ನು ಪರಿಹರಿಸುವುದು ಕೇವಲ ತಾಂತ್ರಿಕ ಸವಾಲಲ್ಲ ಆದರೆ ನೈತಿಕ ಕಡ್ಡಾಯವಾಗಿದೆ,” ಎಂದು ಒತ್ತಿಹೇಳುತ್ತಾರೆ. ಕೃತಕ ಬುದ್ಢಿಮತ್ತೆ ನ್ಯೂಕ್ಲಿಯರ್ ತಂತ್ರಜ್ಞಾನದಷ್ಟೇ ದೈತ್ಯ ಶಕ್ತಿ. ಇಂಥ ದೈತ್ಯಶಕ್ತಿಯೊಂದಿಗೆ ದೊಡ್ಡ ಜವಾಬ್ದಾರಿಯೂ ಬರುತ್ತದೆ. ದೈತ್ಯನನ್ನು ದಾನವನನ್ನಾಗಿಸದಿರಲು ಕೆಲವೇ ಕಾರ್ಪೋರೇಟುಗಳ, ಕೆಲವೇ ದೇಶಗಳ ಬಿಗಿಮುಷ್ಟಿಯಿಂದ, ರಾಜಕೀಯ ಮತ್ತು ಧಾರ್ಮಿಕ ಷಡ್ಯಂತ್ರಗಳಿಂದ ಆದಷ್ಟೂ ದೂರವಿಡುವುದು ಬಹಳ ಮುಖ್ಯವಾಗುತ್ತದೆ. ಐಸಾಕ್ ಅಸಿಮೊವ್‌ನ “ಐ, ರೋಬೋಟ್” ಮತ್ತು ಫಿಲಿಪ್ ಕೆ. ಡಿಕ್‌ನ “ಡು ಆಂಡ್ರಾಯ್ಡಸ್ ಡ್ರೀಮ್ ಆಫ್ ಎಲೆಕ್ಟ್ರಿಕ್ ಶೀಪ್?” ನಂತಹ ಕಾದಂಬರಿಗಳು ಕೃತಕ ಬುದ್ಢಿಮತ್ತೆಯ ಭವಿಷ್ಯದ ಬಗ್ಗೆ ಬರೆದ ಕಾದಂಬರಿಗಳು ಭಯಹುಟ್ಟಿಸುವಂತಿವೆ.

ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ದೊಡ್ಡ ಭರವಸೆ. ಈ ಹೊಸ ಪ್ರಪಂಚದ ಸಂಕೀರ್ಣತೆಗಳನ್ನು ಉಪಯೋಗಿಸುವಾಗ ಮನುಕುಲದ ಮತ್ತು ಈ ಭೂಮಿಯ ಉಳಿವಿನ ಯೋಗಕ್ಷೇಮದ ಶಕ್ತಿಯಾಗಿ ಬಳಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ, ಅಷ್ಟೇ ಅಲ್ಲ, ಅದರ ಪ್ರಯೋಜನಗಳನ್ನು ಸಮಾನವಾಗಿ ವಿತರಿಸಬೇಕಾದ ಸವಾಲೂ ಇದೆ. ಮಾನವನ ವೈಜ್ಞಾನಿಕ ಸಾಧನೆಯ ಹಾದಿಯಲ್ಲಿ ಮನುಷ್ಯನ ಮನಸ್ಸಿನಷ್ಟೇ ಜಟಿಲವಾದ ಕೃತಕ ಬುದ್ಧಿಮತ್ತೆ ಮನುಷ್ಯನ ಬುದ್ಧಿಮತ್ತೆಗೇ ಸವಾಲಾಗುತ್ತಿದೆ. ಪ್ರೊಫೆಸರ್ ಸ್ಟೀಫನ್ ಹಾಕಿಂಗ್, “ಶಕ್ತಿಶಾಲಿ ಕೃತಕ ಬುದ್ಢಿಮತ್ತೆಯು ಉದಯವು ಮಾನವೀಯತೆಗೆ ಸಂಭವಿಸುವ ಅತ್ಯುತ್ತಮ ಅಥವಾ ಕೆಟ್ಟ ವಿಷಯವಾಗಲಿದೆ” ಎಂದು ಎಚ್ಚರಿಸಿದ್ದಾರೆ. ಕೃತಕ ಬುದ್ಢಿಮತ್ತೆಯು ಫ್ರಾಂಕಸ್ಟೀನ್ ಆಗದಂತೆ, ಭಸ್ಮಾಸುರನಾಗದಂತೆ ನೋಡಿಕೊಳ್ಳುವುದು ಈ ಹೊಸ ಜಗತ್ತಿನ ಪ್ರಮುಖ ಸವಾಲಾಗಲಿದೆ.

(ವೈದ್ಯಸಂಪದದಲ್ಲಿ ಮೊದಲು ಪ್ರಕಟಿತ)

ಹೀಗೊಂದು (ಹಾಳು) ಹರಟೆ

ನಮಸ್ಕಾರ ಅನಿವಾಸಿ ಬಂಧುಗಳಿಗೆ. ತಮಗೆಲ್ಲ  ಅಕ್ಷಯತೃತೀಯಾ ಹಾಗೂ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು.
‘ಭಕ್ತಿ ಇಲ್ಲದ ಬಡವನು ನಾನಯ್ಯ
ಕಕ್ಕಯ್ಯನ ಮನೆಯಲೂ ಬೇಡಿದೆ,
ದಾಸಯ್ಯನ ಮನೆಯಲೂ ಬೇಡಿದೆ,
ಚೆನ್ನಯ್ಯನ ಮನೆಯಲೂ ಬೇಡಿದೆ,
ಎಲ್ಲ ಪುರಾತನರು ನೆರೆದು
ಭಕ್ತಿ ಭಿಕ್ಷವನಿಕ್ಕಿದರೆ ಎನ್ನ ಪಾತ್ರೆ ತುಂಬಿತ್ತು
ಕೂಡಲ ಸಂಗಮದೇವಾ’.
ವಚನದಲ್ಲಿ ನಾಮಾಮೃತ ತುಂಬಿದ ಬಸವಣ್ಣನವರನ್ನು ತುಂಬು ಮನದಿಂದ ನೆನೆಯೋಣ. ಲೋಕದ ಡೊಂಕ ತಿದ್ದುವ ಉಸಾಬರಿ ಬಿಟ್ಟು ನಮ್ಮ ನಮ್ಮ ತನುವ- ಮನವ ಸಂತೈಸಿಕೊಂಡು , ಇವನಾರವ ಎನ್ನದೇ ಇವ ನಮ್ಮವ ಎಂದು ಜಗವನಪ್ಪಿಕೊಂಡು ಜಗದೀಶನಿಗೆ ಪ್ರಿಯರಾಗೋಣ. ಏನಂತೀರಿ?
ಇಂದಿನ ಓದಿಗಾಗಿ ಹಳೆಯ ಹರಟೆಯೊಂದನ್ನು ನಾನು ಹಂಚಿಕೊಳ್ಳುತ್ತಿರುವೆ. ಓದಿ ನಿಮ್ಮ ಅನಿಸಿಕೆಗಳನ್ನು ನೀವು ಹಂಚಿಕೊಳ್ಳಿ.

~ ಸಂಪಾದಕಿ

ಆಕಳಿಕೆ – ತೂಕಡಿಕೆ

‘ಸಮಯಾ ಸಮಯವುಂಟೇ ಭಕ್ತವತ್ಸಲ ನಿನಗೆ’ಅಂತ ಕನಕದಾಸರು ಹಾಡಿದ್ಹಂಗ ಈ ಆಕಳಿಕಿಗೆ ಸಮಯಾಸಮಯ ಅಂತ ಏನೂ ಇಲ್ಲ...ಕಾರ್ಯಕಾರಣ ಸಂಬಂಧವೂ ಇಲ್ಲ.ಎಲ್ಲೆ ಬೇಕಾದರೂ ಯಾವಾಗ ಬೇಕಾದ್ರೂ ಬಂದಬಿಡತಾವ;ಮಾನ ಕಳೆದುಬಿಡತಾವ.ಯಾವುದರೇ ಕಾರ್ಯಕ್ರಮದಾಗ ಭಾಷಣಕಾರರು ಗಂಭೀರವಾಗಿ ವಿಷಯ ಮಂಡಸೂ ಮುಂದ ಮುಂದಿನ ಸೀಟಿನಾಗ ವಕ್ಕರಿಸಿದ ನೀವು  ‘ಆsss’ಅಂತ ಆಕಳಿಸಿ ಬಾಯಾಗs ವಿಶ್ವರೂಪ ತೋರಿಸಿದ್ರ ಎದುರಿಗಿನವರು ಕಕ್ಕಾಬಿಕ್ಕಿ ಆಗಿಬಿಡತಾರರೀ..ಕ್ಲಾಸ್ ರೂಮ್ ನಾಗ ಟೀಚರ್ ಏನೋ ಗಹನವಾದ ವಿಷಯವನ್ನು ನಿಮ್ಮ ತಲೆಬುರುಡಿನಾಗ ತುಂಬಲಿಕ್ಕೆ ಅಂತ ಹರಸಾಹಸ ಮಾಡಕೋತ ಹೆಣಗಾಡತಿರಬೇಕಾದ್ರ ನೀವು’ಆsss’ ಅಂತ ಆಕಳಿಸಿದ್ರ ಅವರ ಸಿಟ್ಟು ನೆತ್ತಿಗೇರಿ ನಿಮ್ಮನ್ನು ಸ್ಟ್ಯಾಂಡ್ ಅಪ್ ಆನ್ ದ ಬೆಂಚೋ ಇಲ್ಲ ಗೆಟ್ ಔಟ್‌ ಫ್ರಾಮ್ ಮೈಕ್ಲಾಸೋ ಖಂಡಿತ ಮಾಡಿಬಿಡತಾರರೀ. ಇನ್ನ ಕೆಲವೊಮ್ಮೆ ವಯಸ್ಸಾದ ಹಿರಿಯರು ನೀವು ಮಾತಿಗೆ ಸಿಕ್ಕದ್ದೇ ತಡ ತಮ್ಮ ಪುರಾನಾ ಜಮಾನಾದ ಪುರಾಣದ ಕಂತಿ ಬಿಚ್ಚಿದ್ರು ಅಂದ್ರ...ನಿಮ್ಮೂ ಶುರುವಾಗತಾವ ಆಕಳಿಕಿ ಸಾಲಾಗಿ.ಆದ್ರ ಪಾಪ! ಕೆಲವೊಬ್ಬರಂತೂ ಅವನ್ನ ಸಂಪೂಣ೯ ದಿವ್ಯನಿಲ೯ಕ್ಷ್ಯ ಮಾಡಿ ತಮ್ಮ ಕಥಿ ಹಂಗೇ ಮುಂದುವರೆಸಿರತಾರ ಅನ್ರಿ..ನೀವೋ ಆಕಳಿಸಿ ಆಕಳಿಸಿ ಬಾಯಿನೋವು ಬಂದು ಕಣ್ಣೀರು ಕಪಾಳಕ್ಕ ಹರಿಸಿ ದಣಿಯುತ್ತೀರಿ.ಮತ್ತ ಯಾವಾಗರೇ ಯಾರದರೇ  ಪರಿಚಿತರ ಮನಿಗೆ ಹೋಗಿರತೀರಿ ಅಂತಿಟ್ಟುಕೋರಿ.ಅವರ ಮನ್ಯಾಗ ಆಗಷ್ಟೇ  ಮಗಂದೋ ,ಮಗಳದೋ ಮದುವಿ ಆಗಿರತದ..ಮದುವಿ ಫರಾಳ ತಿನ್ನಲಿಕ್ಕೆ ಕೊಡದಿದ್ದರೂ ಸರಿ ಮದುವಿ ಆಲ್ಬಂ- ವಿಡಿಯೋ ತಪ್ಪಲಾರದ ತೋರಸತಾರ.ಆ ಹುಡುಗನೋ ಹುಡುಗಿನೋ ಬಿಟ್ರ ನಿಮಗ ಯಾರೂ ಗೊತ್ತಿರಂಗಿಲ್ಲ..ಆದ್ರೂ ಮೂರಮೂರ ತಾಸು ಕೂತ ಅದನ್ನ ನೋಡ ಅಂದ್ರ ಆಕಳಿಕಿ ಬರದ s ಬಿಟ್ಟಾವ?!
ಹೀಂಗ ಆಕಳಿಸೋದು ಸಭ್ಯತೆ ಅಲ್ಲ ಅಂತ ನಾನೂ ಒಪ್ಪಗೋತಿನಿ.ಆದ್ರ ಅವುಗಳ ನಿಯಂತ್ರಣ ನಮ್ಮಕೈಯಾಗ ಇಲ್ಲ ಅಲ್ರೀ.ತಮ್ಮ ಮನಸ ಬಂದಾಗ ಹಿಂದಮುಂದ ಏನೂ ಸೂಚನೆ ಕೊಡದ ಧಬಕ್ ಅಂತ ಬಂದಿಳಿಯೋ ಅತಿಥಿಗಳಗತೆ ನುಗ್ಗಿ ಬಂದ್ರ ಅದರಾಗ ನಮ್ಮ ತಪ್ಪೇನದ ಅಲ್ಲೇನ್ರಿ? ಇದೆಲ್ಲ ಎಲ್ಲಾರಿಗೂ ಗೊತ್ತಿದ್ರೂ ನಾವು ಮಾತಾಡೂಮುಂದ ಎದುರಿಗಿನವರು ಆಕಳಿಸಿದ್ರ ನಮ್ಮ ಕಣ್ಣು ಕೆಂಪಾಗೋದಂತೂ ಗ್ಯಾರಂಟಿ .ಎಷ್ಟೋ ಸಲ ನಾನೇ ನನ್ನ ಮಕ್ಕಳಿಗೆ ಬಯ್ಯತಿರತೀನಿ...’ನಾನಿಲ್ಲೆ ಗಂಟಲ ಒಣಗಿಸಿಕೊಂಡು ,ತಲಿ ಕೆಡಿಸಿಕೊಂಡು ಇಷ್ಟ ಸೀರಿಯಸ್ಸಾಗಿ ಏನೋ ಹೇಳಲಿಕ್ಹತ್ತೀನಿ..ನೀವು ಆಕಳಿಸಕೋತ ಹೆಂಗ ಕೂತೀರಿ ನೋಡ್ರಿ ನಿಲ೯ಜ್ಜರ ಹಂಗ ‘ಅಂತ.
ಕಳೆದ ಸಲ ವಲ್ಡ್೯ ಕಪ್ ಮ್ಯಾಚ್ ನಡದಾಗ ಪಾಕಿಸ್ತಾನದ ಕ್ರಿಕೆಟ್ ಟೀಮಿನ ಕಪ್ತಾನ್ ಸರಫರಾಜ್ ಆಕಳಿಸಕೋತ ಕೂತಿದ್ದು ಒಂದು ಬ್ರೇಕಿಂಗ್ ನ್ಯೂಸೇ ಆಗಿಬಿಟ್ಟಿತ್ತಲಾ....ಪಾಪ! ಅವರೂ ಮನಷಾರೇ.ಇಷ್ಟೆಲ್ಲಾ ಹಗಲೂ ರಾತ್ರಿ ಪ್ರಾಕ್ಟೀಸ್ ಮಾಡಿ ಆಡೂಮುಂದಾಗ ಸೋಲೂ ಹಂತದಾಗ ಬ್ಯಾಸರಕೀಲೇ ಒಂದು ಆಕಳಿಸೋ ಸ್ವಾತಂತ್ರ್ಯನೂ ಅವರಿಗಿಲ್ಲ ಅಂದ್ರ ಹೆಂಗರೀ?
ಇನ್ನ ಆಫೀಸಿನಾಗ ಬಾಸ್ ಏನರೇ ಲೆಕ್ಚರ್ ಕೊಡೂಮುಂದ ಆಕಳಿಸಿದ್ರೋ ಮುಗೀತು.ನಿಮ್ಮ ಭತ್ಯೆ ಕಟ್ ಅಂತನೇ ಲೆಖ್ಖ.ಮುಂದ ನಿಮಗ್ಯಾವ ಸಿ.ಎಲ್.ಸ್ಯಾಂಕ್ಷನ್ ಆಗಂಗಿಲ್ರಿ.ನಿಮ್ಮ ಆಕಳಿಕೆ ಸೀದಾ ಅವನ ಅಹಂನ್ನೇ ನುಂಗಿಬಿಟ್ಟಿರತದ.ಅದಕ್ಕಽ ಎಚ್ಚರಿಕೆಲೆ ಇರಬೇಕು.ಆದ್ರ ಮಜಾ ಅಂದ್ರ ಯಾವಾಗ ನೀವು ಎಚ್ಚರಕಿಲೇ ಇರಬೇಕು ಅನಕೋತಿರೋ ಅವಾಗೇ ಇವುಗಳ ಹಾವಳಿ ಭಾಳ ಇರತದ.ಬೆಳತನಕಾ ದೋಸ್ತ್ ರ ಜೋಡಿ ಹರಟಿ ಹೊಡಿಯೂಮುಂದ ,ರಾತ್ರೆಲ್ಲ ನಿದ್ದಿಗೆಟ್ಟು ಓಣ್ಯೋಣಿ ತಿರಗೂಮುಂದ,ಟಿವಿ ಮುಂದ ಕೂತು ಸುಟ್ಟು ಸುಡುಗಾಡು ಸಿನೆಮಾ ನೋಡೂಮುಂದ,ಮೊಬೈಲ್ ನಾಗ ಕ್ಯಾಂಡಿಕ್ರಷ್ ,ಪಬ್ಜಿ ಆಡೂಮುಂದ ತಪ್ಪಿನೂ ಒಂದರೇಽ ಆಕಳಿಕಿ ಬಂದ್ರ ಕೇಳ್ರಿ.
ಸೂರ್ಯೋದಯಕ್ಕ ಮುಂಚೆ ಅರುಣನ ಆಗಮನ ಆಗೂಹಂಗ ನಿದ್ದಿ ಬರೂದರ ಮುನ್ಸೂಚನೆ ಈ ಆಕಳಿಕೆಗಳು ಅನ್ನಬಹುದು.ಆದ್ರ ಇದಕ್ಕ ತೀರ ವಿರುದ್ಧವಾಗಿ ಒಂದೊಂದುಸಲ ಮಧ್ಯಾಹ್ನಮೂರಮೂರು ತಾಸು ಮಲಕೊಂಡು ಎದ್ದಮ್ಯಾಲೂ ಒಂದರಹಿಂದ ಒಂದು ಹಂಗೇ ಸಾಲುಹಿಡದು ಬರತಿರತಾವ.ಕೆಲವೊಮ್ಮೆ ಬ್ಯಾಸರ ಆಗಿದ್ರನೂ ಬರತಾವ.ಕೆಲವೊಮ್ಮೆ ವಿಪರೀತ ದಣಿದಾಗ,ದೇಹ ಬಳಲಿದಾಗ ಬಂದ್ರ ಕೆಲವೊಮ್ಮೆ ಏನೂ ಕೆಲಸ ಇಲ್ಲದಽ ಸೋಮಾರಿಗಳಾಗಿ ಸೋಫಾದ ಮ್ಯಾಲೆ ಮೈ ಚೆಲ್ಲಿದಾಗನೂ ಬರತಾವ...ಅತೀ ಬ್ಯಾಸಗ್ಯಾಗ..ಅತೀ ಥಂಡ್ಯಾಗ....ಹೀಂಗs ಅಂತ ಹೇಳಲಿಕ್ಕೆ ಬರಂಗಿಲ್ರಿ .
ಯಾರರೇ ಪ್ರೀತಿಪಾತ್ರರು ಭೆಟ್ಟಿ ಆಗಿ ವಾಪಸ್ ಹೋದಾಗನೂ ಹೀಂಗಽ ಆಕಳಿಕಿ ಬರತಾವ.ಮೈತುಂಬ ,ಮನಿತುಂಬ ಕೆಲಸ ನೋಡಿ ತಲಿ ದಿಮ್ ಅಂದನೂ ಆಕಳಿಕಿ ಬರತಾವ.ಕೆಲವೊಮ್ಮೆ ಸುಮ್ಮೇ ನಮ್ಮ ಬಾಜೂಕಿನವರು ಆಕಳಿಸತಾರ ಅಂತ ನಮಗೂ ಆಕಳಿಕಿ ಬರತಾವ.ಇನ್ನ ಕೆಲವೊಮ್ಮೆ ಶಾಸ್ತ್ರೀಯ ಸಂಗೀತ ಕಾರ್ಯಕ್ರಮದಾಗ ,ಹರಿದಾಸರ ಹರಿಕಥಿಯೊಳಗ,ಸತ್ಯನಾರಾಯಣ ಕಥಿ ಅಂತಹ ದೀರ್ಘ ಪೂಜಾಕಥಿಗಳನ್ನು ಕೇಳೂಮುಂದ ಎಲ್ಲಿರತಾವೋ ಏನೋ ಓಡೋಡಿ ಬರತಾವ.ಅದಕ್ಕಽ ಅಂಥಾ ಕಾರ್ಯಕ್ರಮದಾಗೆಲ್ಲ ನಾ ಆದಷ್ಟು ಹಿಂದಿನ ಸೀಟೇ ಪ್ರಿಫರ್ ಮಾಡತೀನ್ರಿ.ನಂಗ ಈ ಪೂಜಾವಿಧಿಗಳೆಲ್ಲ ಝಟ್ ಪಟ್ ಅಂತ ಮುಗದ್ರ ಭಾಳ ಭಕ್ತಿ,ಏಕಾಗ್ರತೆ ಎಲ್ಲಾ ಇರತದರಿ.ಅದೇನರೆ ಅಧ೯ತಾಸಕಿಂತ ಜಾಸ್ತಿ ಇತ್ತೋ ....ಆಕಳಿಕಿ ಶುರುನೇ.ಸತ್ಯನಾರಾಯಣ ಪೂಜಾದ ಆ ಕಲಾವತಿ – ಲೀಲಾವತಿ ಕಥಿ ಕೇಳಕೋತ ಆಕಳಿಕಿ ಬಂದ್ರ ಒಳಗೊಳಗೇ ಪುಕಪುಕ ಆಗತಿರತದ್ರಿ.’ನನ್ನ ಕಥಿ ಕೇಳೂಮುಂದ ಆಕಳಿಸಿ ನನಗ ಅಪಮಾನ ಮಾಡಿದಿ’ ಅಂತ ಸತ್ಯನಾರಾಯಣ ಎಲ್ಲರೇಽ ಸಿಟ್ಟಿಗೆದ್ದು ಹಡಗಿನಲ್ಲಿದ್ದ ಧನಕನಕಗಳನ್ನು ಎಲಿ-ತೊಪ್ಪಲು-ಕಲ್ಲುಗಳನ್ನಾಗಿ ಪರಿವತ೯ನೆ ಮಾಡಿದ್ಹಂಗ ಇರೋ ಒಂದೆರಡು ನನ್ನ ಬಂಗಾರದೊಡವೆಗಳನ್ನುಹಿತ್ತಾಳೆಯನ್ನಾಗಿ,ಇರೋ ಒಂದೆರಡು ರೇಶ್ಮೆಸೀರೆಗಳನ್ನು ಹಳೆಯ ಹರಿದ ಸೀರೆಗಳನ್ನಾಗಿ ಮಾಡಿಬಿಟ್ಟ್ರ.....ಅಂತ ಗಾಭರಿ ಆಗತಿರತದ.ಆದ್ರ ಆ ಗಾಭರಿಗೆ ಇನ್ನೊಂದೆರಡು ಆಕಳಿಕೆ ಹೆಚ್ಚಿಗೆ ಬರತಾವು ನೋಡ್ರಿ...

ನಿಮಗೊಂದು ಮಜಾ ಸುದ್ದಿ ಗೊತ್ತೇನ್ರಿ? ತಾಯಿ ಗಭ೯ದಾಗಿರೋ ಮಗು ಸಹಿತ ಆಕಳಸತದಂತ.ವೈದ್ಯಕೀಯ ಶಾಸ್ತ್ರದ ಪ್ರಕಾರ ಅದು ಮೆದುಳಿನ ಒಳ್ಳೆಯ ಬೆಳವಣಿಗೆಯ ಲಕ್ಷಣ ಅಂತ.ಈ ಆಕಳಿಸೋ ಪ್ರಕ್ರಿಯೆ ಬರೇ ನಮ್ಮ ಮನುಷ್ಯ ಜಾತಿಯೊಳಗ ಅಲ್ರೀ...ಭಾಳಷ್ಟು ಪ್ರಾಣಿಗಳೊಳಗೂ ಅದ ಅಂತ.
ಇನ್ನ ಈ ಆಕಳಿಕೆಗಳಿಗೂ ಮತ್ತ ಪರೀಕ್ಷಾಗೂ ನೇರಾನೇರ ಸಂಬಂಧ ಅದನೋಡ್ರಿ.ಪರೀಕ್ಷಾ ಟೈಮದಾಗ ಕೈಯಾಗ ಪುಸ್ತಕ ಹಿಡದ್ರ ಸಾಕು ಆಕಳಿಕಿ ಶುರು..ನಂಗಂತೂ ಗಣಿತದ ಪ್ರಶ್ನೆಪತ್ರಿಕೆ ನೋಡಿದರ ಸಾಕು..ಅದರಾಗ ಎಷ್ಟು ಲೆಖ್ಖ ಮಾಡಲಿಕ್ಕೆ ಕೊಟ್ಟಾರೋ ಅದರ ದುಪ್ಪಟ್ಟು ಆಕಳಿಕೆ ಬರೂವರೀ.
ನಿಮಗೆಲ್ಲ ರಾಮಾಯಣದ ಕಥಿ ಗೊತ್ತೇ ಇರತದ.ಅದರಾಗ ನಮ್ಮಹನುಮಂತ ಲಂಕಾಪ್ರವೇಶ ಮಾಡೂಮುಂದ ಸುರಸಾ ಎಂಬ ರಕ್ಕಸಿಯ ಕಥಿ ಬರತದ.ನನ್ನ ಬಾಯಲ್ಲಿ ಪ್ರವೇಶಿಸಿ ಹೊರಬಂದರೆ ಮಾತ್ರ ನಿನಗೆ ಲಂಕಾಪ್ರವೇಶ ಅಂತ ಹೇಳಿದ ಅಕಿ ಆ ಅಂತ ಆಕಳಿಸತಾಳ.ಹನುಮ ತನ್ನ ಗಾತ್ರವನ್ನುಬೃಹದಾಕಾರವಾಗಿ ಬೆಳೆಸತಾನ.ಅದಕ್ಕ ತಕ್ಕಂಗ ‘ಆ’ಅಂತ ಬಾಯಿ ಅಗಲಿಸಿದ ಅಕಿನ ಬಾಯೊಳಗೆ ಹೋದ ಹನುಮ ತಕ್ಷಣವೇ ಪೂತಿ೯ ಸಣ್ಣವನಾಗಿ ಅಕಿ ಬಾಯಿ ಮುಚ್ಚುವುದರೊಳಗಾಗಿ ಹೊರಬಂದುಬಿಡುವ ಕಥಿ ಭಾಳ ಸ್ವಾರಸ್ಯಕರವಾಗೇದ.ಅಂದ್ರ ಜೀವನ-ಮೃತ್ಯುಗಳೆರಡೂ ಒಂದು ಆಕಳಕಿ ಅಳತೀ ಒಳಗಽ ಅವ ಅನ್ನೂ ತತ್ವ ನಮಗ ಅಥ೯ ಆಗತದ.
ಆಕಳಿಕಿ ಸುದ್ದಿ ಆತು..ಇನ್ನ ತೂಕಡಿಕಿ ಸುದ್ದಿನೂ ಒಂಚೂರು ಮಾತಾಡೇ ಬಿಡೂಣು.ಇವೆರಡೂ ಒಂಥರಾ ಅವಳಿ ಸೋದರರು ಇದ್ಹಂಗ. ಈ ತೂಕಡಿಕಿನೂ ಅಷ್ಟೇ ...ಯಾವ ಮಾಯದಾಗ ಬರತದೋ ಗೊತ್ತೇ ಆಗಂಗಿಲ್ಲರೀ.ಒಂಥರಾ ಗಾಢನಿದ್ದೆನೂ ಅಲ್ಲದ,ಎಚ್ಚರಿಕೆನೂ ಅಲ್ಲದ ಈ ತೂಕಡಿಕಿ ಮಜಾ ಅನುಭವಿಸಿದವರಿಗೇ ಗೊತ್ತು..ಎಷ್ಟೋ ಸಲ ಸಂತ್ಯಾಗ ತೂಕಡಿಸೋ ಮಂದಿನೂ ಇರತಾರ.ಕೆಲವು ಸಲ ನಮ್ಮ ಮನ್ಯಾಗ ಟಿವಿ ಜೋರ್ ದನಿ ತಗದು ಒದರತಿರತದ್ರಿ.ಅಡಿಗಿ ಮನ್ಯಾಗ ನನ್ನ ಮಿಕ್ಸಿ,ಕುಕ್ಕರ್ ಸೀಟಿ ಧಾಂಧಲೆ ನಡದಿರತದ.ನನ್ನ ಅವಳಿ ಮಕ್ಕಳದು ಯಾವುದೋ ಸಣ್ಣ ವಿಷಯಕ್ಕೆ ಜೋರ ಜಗಳ ನಡದಿರತದ.ಆದ್ರ ನಮ್ಮ ಮನಿಯವರು ಹಂಗಽ ಸೋಫಾಕ್ಕೊರಗಿ ತೂಕಡಿಸತಿರತಾರ. ಕೆಲವೊಬ್ಬರಿಗೆ ಈ ಗದ್ದಲದ ಬ್ಯಾಗ್ರೌಂಡ್ ನಾಗ ಭಾಳ ಛಂದ ನಿದ್ದಿ ಬರತದರಿ....ಪುಷ್ಪಕ ವಿಮಾನದ ಕಮಲಹಾಸನಗತೆ.ಈ ಬಸ್ಸು-ಟ್ರೇನುಗಳ ಪ್ರವಾಸ ಅಂತೂ ತೂಕಡಿಕೆಯ ತವರು ಎನ್ನಬಹುದು.ನಾ ಅಂತೂ ಎಷ್ಟೋ ಸಲ ಸಿಟಿ ಬಸ್ ನಾಗೂ ತೂಕಡಿಸಕೋತ ಓಡಾಡಿ ಎರಡೆರಡು ಸ್ಟಾಪ್ ದಾಟಿ ಇಳಿದ ಪ್ರಸಂಗಗಳೂ ಭಾಳ ಅವರೀ.ಎಷ್ಟೋ ಸಲ ನಮ್ಮ ಬಾಜೂಕ ಕೂತವರು ತೂಕಡಿಸಕೋತ ನಮ್ಮ ಮೈಮ್ಯಾಲ ತಮ್ಮ ಭಾರ ಹಾಕಿ ,ಎಷ್ಟೋ ಸಲ ನಾವು ತೂಕಡಿಸಕೋತ ಅವರ ಮ್ಯಾಲೆ ಜೋಲಿ ಹೊಡೆದು ಭಯಂಕರ ಮುಜುಗರದ ಪ್ರಸಂಗಗಳನ್ನೂ ಅನುಭವಿಸುವುದಾಗತದ.ಇನ್ನಽ ಎಷ್ಟೋ ಬಾಲಿವುಡ್ ಮೂವಿಗಳೊಳಗ ಹೀಂಗಽ ಬಸ್ ನಾಗ ತೂಕಡಿಸಿ ಹಿರೋನ ಹೆಗಲ ಮೇಲೆ ತಲೆಯಿಡೋ ಹಿರೋಯಿನ್ ,ಅವಳ ಹಾರಾಡುತ್ತಿರೋ ಮುಂಗುರುಳನ್ನು ನೇವರಿಸೋ ಹಿರೋ ..ಹಿನ್ನೆಲೆಯಲ್ಲಿ ಒಂದು ಹಾಡು...ಲವ್ ಸ್ಟೋರಿಗೆ ನಾಂದಿ ಆಗಿಬಿಡತದ್ರಿ ಈ ತೂಕಡಿಕಿ.
ಆದ್ರ ಎಷ್ಟೋ ಸಲ ಈ ತೂಕಡಿಕಿಯಿಂದ ಅವಘಡಗಳೂ ಆಗತಾವ.ರಾತ್ರಿ ಬಸ್ ಡ್ರೈವ್ ಮಾಡುತ್ತಿರುವ ಡ್ರೈವರ್ ತೂಕಡಿಸಿದರ ಮುಗೀತು..ಲಕ್ಷ್ಮಿ ರಮಣ ಗೋವಿಂದ..ನೈಟ್ ಡ್ಯೂಟಿ ಮಾಡುವ ನಸ್೯ ಡಾಕ್ಟರ್ ತೂಕಡಿಸಿದ್ರ ಪೇಶಂಟ್ ಗಳ ಗತಿ ಅಧೋಗತಿ.ತೂಕಡಿಸುತ್ತ ಮಗುವಿಗೆ ಹಾಲೂಡಿಸಿದ ತಾಯಿ...ಉಸಿರುಗಟ್ಟಿದ ಮಗು ಇಂಥವೆಲ್ಲ ಸುದ್ದಿಗಳನ್ನು ಆಗಾಗ ಕೇಳಕೋತನ ಇರತೀವಿ.ತೂಕಡಿಸಿಕೋತ ಕೂತ ಸೆಕ್ಯೂರಿಟಿ ಗಾಡ್೯ಗಳ ಮುಂದೆನೇ ಮನೆ ,ATM ಗಳ ಕಳ್ಳತನಗಳೂ ನಡೆಯುವುದುಂಟು.
ತೂಕಡಿಕಿ ಮಾತು ಬಂದಾಗ ನಮ್ಮ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಮರೆಯುವ ಹಾಗೆಯೇ ಇಲ್ಲ.ಸಭೆ -ಸಮಾರಂಭಗಳಲ್ಲಿ ,ಸದನದ ಕಲಾಪಗಳಲ್ಲಿ ಅವರು ತೂಕಡಿಸಿ ಸುದ್ದಿಯಾಗುವುದು ಸವೇ೯ಸಾಮಾನ್ಯವಾಗಿತ್ತು.ಅದಕ್ಕಽ ಬಲ್ಲವರು ‘ತೂಕಡಿಸಿ ತೂಕಡಿಸಿ ಬೀಳದಿರೋ ತಮ್ಮಾ ...ಓ ಮಂಕುತಿಮ್ಮಾ ‘ಅಂತ ಹಾಡಿರಬೇಕು.
ಏನ ಇರಲಿ ,ಮನಷಾ ಅಂದಮ್ಯಾಲೆ ದಿನಕ್ಕ ಒಮ್ಮೆರೆ ಆಕಳಿಸಲಾರದ,ತೂಕಡಿಸಲಾರದ ಇರಲಿಕ್ಕೆ ಆದೀತ?ಈಗ ಈ ಬರಹವನ್ನು ಓದಕೋತ ನೀವೆಲ್ಲಾರೂ ಅದೆಷ್ಟು ಸಲ ಆಕಳಿಸಿ..ತೂಕಡಿಸಿರತೀರೋ ಭಗವಂತಗಽ ಗೊತ್ತು.
ಇತಿ ಶ್ರೀ ಮಾನವೇತಿಹಾಸ ವತ೯ಮಾನ ಪುರಾಣೇ ಆಕಳಿಕಿ-ತೂಕಡಿಕಿ ಅಧ್ಯಾಯಂ ಸಂಪೂರ್ಣಂ..


~ ಗೌರಿಪ್ರಸನ್ನ