ನಮಸ್ಕಾರ ಅನಿವಾಸಿ ಬಳಗಕ್ಕೆ. ಇನ್ನೇನು ಬಂದೇ ಬಿಡಲಿರುವ ಕ್ರಿಸ್ಮಸ್ ಹಬ್ಬದ ಹಾಗೂ ಹೊಸವರುಷದ ಹಾರ್ದಿಕ ಶುಭಾಶಯಗಳು.
ದೇಶ- ಕಾಲ ಯಾವುದಿದ್ದರೇನು? ಮಾನವ ಜೀವ - ಭಾವ ಜಗತ್ತು ಮಾತ್ರ ಸದಾ ಅದೇ ಅಲ್ಲವೇ? ಅದಕ್ಕೆಂದೇ ತ್ರೇತೆಯ ಸೀತೆ, ದ್ವಾಪರದ ರಾಧೆ ಈಗಲೂ ನಮ್ಮನ್ನು ಕಾಡುತ್ತಾರೆ. ನನ್ನ ಹಳ್ಳಿಯ ನನ್ನ ಪರಿಧಿಗೆ ಬಂದ ಎಲ್ಲ ಹೆಂಗಳೆಯರದೂ ಒಂದೊಂದು ಕಥೆ.. ವ್ಯಥೆ. ಅದನ್ನೇ ಇಲ್ಲಿನ ಕವನ ಹೇಳಲು ಪ್ರಯತ್ನಿಸುತ್ತಿದೆ. ಹಾಗೆಯೇ ಒಂದು ಲಘು ಹರಟೆಯೂ ಉಂಟು. ಒಪ್ಪಿಸಿಕೊಳ್ಳಿ.
~ ಸಂಪಾದಕಿ
ನಮ್ಮೂರ ರಾಧೆಯರು..
ನಮ್ಮೂರಲ್ಲಿ ಜುಳು ಜುಳು ಹರಿವ ತಂಪಾದ ನದಿಯಿಲ್ಲ. ಹಿಂಡಿದರೆ ದಂಡಿ ಹಾಲು ಕರೆವ ದನದ ಮಂದೆಗಳಿಲ್ಲ. ಒಣಬಿದಿರ ಕೊಳಲ ಮಾಡಿ ನುಡಿಸಿ ಕುಣಿಸುವ ಕೃಷ್ಣನೂ ಇಲ್ಲ. ನಮ್ಮೂರ ಹೆಸರಂತೂ ಗೋಕುಲ- ಬೃಂದಾವನ ಮೊದಲೇ ಅಲ್ಲ.
ಯಮುನೆ ಇರದಿದ್ದರೇನಂತೆ ಇಲ್ಲಿ ಕಾಳಿಂಗರಿಗೇನೂ ಕೊರತೆ ಇಲ್ಲ. ರಾಸ ರಚಿಸಲೆಂದೇ ರಸಿಕರು ಸುತ್ತಮುತ್ತ ಕಾಯ್ದುಕೊಂಡಿಹರಲ್ಲ?! ಪ್ರತಿಷ್ಠೆ, ಮರ್ಯಾದೆ, ರಕ್ಷಣೆಯ ಹೆಸರಲ್ಲಿ ಚೈತನ್ಯ ಹೋಮ ನಡೆವುದಲ್ಲ.. ದ್ವಾಪರವಲ್ಲವಾದ್ದರಿಂದ ನರಕಾಸುರ ಬಂಧನದಿಂದ ಈ ಗೋಪಿಕೆಯರಿಗೆ ಮುಕ್ತಿಯೇ ಇಲ್ಲ..
~ ಗೌರಿಪ್ರಸನ್ನ
ಕ್ಯಾಲೆಂಡರ್ ಪುರಾಣ
2025 ಅರಿವಿಲ್ಲದೇ ಉರುಳಿ ಇನ್ನೇನು ಹೊಸ ವರುಷದ ಹೊಸಿಲಲ್ಲಿದ್ದೇವೆ. ಇಷ್ಟಕ್ಕೂ ಈ ಹೊಸ ವರ್ಷ ಅನ್ನೋದು ಏನು? ಅದೇ ಹಗಲು ರಾತ್ರಿಗಳು, ಅದೇ ಸೂರ್ಯ ಚಂದ್ರರು, ಅವೇ ಗಿಡಮರ-ಉಪವನಗಳು, ಅವೇ ಮಾನವ ಮನದ ರಾಗ ದ್ವೇಷ ಭಾವವೇಗಗಳು, ಅದೇ ಹೊಡೆದಾಟ ಬಡೆದಾಟಗಳು,ಅವೇ ಚರ್ವಿತ ಚರ್ವಣ ರಾಜಕೀಯ ಸಾಮಾಜಿಕ ಸುದ್ದಿ ಸಮಾಚಾರಗಳು, ಅವೇ ಹೊಸ ವರ್ಷದ ಹಳೆಯ ರೆಸುಲ್ಯೂಷನ್ ಗಳು.. ಬರೀ ಬದಲಾಗುವ ಕ್ಯಾಲೆಂಡರ್ ಹೊರತುಪಡಿಸಿ ಉಳಿದಿದ್ದೆಲ್ಲಾ ಅದೇ ಹಿಂದಿನದೇ.
ಆದರೆ ಜಡ್ಡು ಕಟ್ಟಿದ ಮನಸ್ಸಿಗೆ ಯಾಂತ್ರಿಕವಾದ ಬದುಕಿಗೆ ಒಂದೆರಡು ಖುಷಿಯ ಕ್ಷಣಗಳು ಬೇಕು ಹಗುರಾಗಲು ಒಂದು ನೆಪಬೇಕು ಆ ನೆಪದಲ್ಲಿ ಆಪ್ತರೊಡನೆ, ಸ್ನೇಹಿತರೊಡನೆ ಬಂಧು ಬಾಂಧವರೊಡನೆ ಒಂದಷ್ಟು ಮಾತು, ಹರಟೆ, ನಗು, ಹಾಡು, ಕುಣಿತ, ತಿನ್ನುವುದು, ಕುಡಿಯುವುದು.. ಅವುಗಳ ಮೂಲಕ ಒಂದು ನಿರಾಳತೆಯನ್ನೂ, ಬಿಡುಗಡೆಯನ್ನೂ, ಸಾರ್ಥಕತೆಯ ಕ್ಷಣಗಳನ್ನೂ, ಹೊಸ ಭರವಸೆಯನ್ನೂ ಪಡೆಯಲು ಬಯಸುವುದಷ್ಟೇ ಅವುಗಳ ಆಚರಣೆಯ ಹಿಂದಿರುವ ಅರ್ಥ. ಬರೀ ಹೊಸ ವರ್ಷದ ಆಚರಣೆ ಅಲ್ಲ ಎಲ್ಲ ಹಬ್ಬ, ದಿನಗಳು, ಜಾತ್ರೆ, ಉತ್ಸವಗಳ ಉದ್ದೇಶವೂ ಅದುವೇ ಅಂಬೋದು ನನ್ನ ಅನಿಸಿಕೆ. ಇಷ್ಟಕ್ಕೂ ಅಖಂಡವಾದ ಅನಂತವಾದ ಕಾಲವನ್ನು ನಮ್ಮ ಅನುಕೂಲಕ್ಕಂತನೇ ತಾನೇ ನಾವು ವಿಭಾಗಿಸಿ ವರುಷ, ತಿಂಗಳು, ಮಾಸ, ತಿಥಿ, ವಾರ ಎಂದೆಲ್ಲ ಮಾಡಿಕೊಂಡಿದ್ದು.ನಿನ್ನೆಯಷ್ಟೇ ಎಲ್ಲಿಯೋ ಓದುತ್ತಿದ್ದೆ.. ಇಥಿಯೋಪಿಯಾ ದೇಶದ ಕ್ಯಾಲೆಂಡರ್, ಅಲ್ಲಿಯ ಹೊಸ ವರುಷ ಎಲ್ಲ ಬೇರೆಯೇ ಅಂತೆ. ಅಲ್ಲೀಗ 2018 ನಡೆದಿದೆಯಂತೆ. ಅದಕ್ಕೇ ಅಲ್ಲವೇ ‘ದೇಶ ಕಾಲ ವಿಭಾಗ ಮನದ ರಾಜ್ಯದೊಳಿರದು’ ಅಂತ ನಮ್ಮ ಗುಂಡಪ್ಪನವರು ಎಂದೋ ಹೇಳಿದ್ದು?!
ಹೊಸ ವರುಷ ಅಂದ ಮ್ಯಾಲೆ ಎಲ್ಲರ ಮನೆಯಾಗೂ ಹೊಸ ಕ್ಯಾಲೆಂಡರ್ ಹಾರಾಡಲಿಕ್ಕೇ ಬೇಕು . ಈ ಕ್ಯಾಲೆಂಡರ್ ನ ಇತಿಹಾಸ ಅಥವಾ ಕೆಲವು ಜನರ ಈ ಜನವರಿ ಫೆಬ್ರವರಿ ಅಥವಾ ಹಿಂದೂ ಪಂಚಾಂಗ ಚೈತ್ರ- ವೈಶಾಖಗಳ ದ್ವಂದ್ವ ಯುದ್ಧ ಇತ್ಯಾದಿಗಳ ಬಗ್ಗೆ ನಾ ಇಲ್ಲೇ ಮಾತನಾಡಲಿಕ್ಕೆ ಹೋಗೋದಿಲ್ಲ ಖರೇ ಹೇಳಬೇಕೆಂದರೆ ನಾವು ಸಣ್ಣವರಿದ್ದಾಗ ಅಂಕಲಪಿ ಹಿಂದೆ ಇದ್ದ ಚೈತ್ರ- ವೈಶಾಖ- ವಸಂತ ಋತು ಹಾಗೂ ಜನವರಿ, ಫೆಬ್ರವರಿ, ಮಾರ್ಚ್, ಏಪ್ರಿಲ್ ಅಂತ ಎರಡನ್ನೂ. ಅಷ್ಟೇ ಶ್ರದ್ಧೆಯಿಂದ ಕಣ್ಮುಚ್ಚಿ ಕೈ ಕಟ್ಟಿ ನಿಂತು ಉರು ಹೊಡೆದಿದ್ದೆವು.. ಕೆಲವೊಮ್ಮೆ ಹಿಂದೆ ಮುಂದೆ ವಾಲಾಡುತ್ತಾ. ಜೋಡಿಗೆ ಆ ಜನವರಿ, ಫೆಬ್ರವರಿಗಳ ಸ್ಪೆಲಿಂಗ್ ಕಲಿಯಲಿಕ್ಕೂ ಪರಿಪಾಟಲು ಪಟ್ಟಿದ್ದು ಸುಳ್ಳಲ್ಲ. ಯಾಕೆಂದರೆ ಇಂಗ್ಲೀಷ್ ನಮ್ಮ ಕನ್ನಡದ್ಹಂಗ ಅಲ್ರಿ ಬಾಯಲ್ಲಿ ಅನ್ನೋದೇ ಬೇರೆ, ಅಲ್ಲಿ ಸ್ಪೆಲಿಂಗ್ ಬರೆಯುವುದೇ ಬೇರೆ. ಈಗ ಉದಾಹರಣೆಗೆ ನೋಡ್ರಿ ಜನವರಿಯನ್ನು ಬರೆಯುವುದು JANUARY ಅಂತ ಇಲ್ಲೇ U ಎಲ್ಲಿಂದ ಬಂತು ಅಂತ ತಲಿ ಕೆಡತಿತ್ತರೀ.. ಈಗಲೂ ಅಷ್ಟೇ ಎಷ್ಟೋ ಶಬ್ದಗಳನ್ನು ಉಚ್ಚಾರ ಮಾಡೂದ್ಹೆಂಗ ಅಂತ ಚಿಂತೀರಿ. ಏನs ಇರಲೀರಿ ನಮಗ ದಿನದ ಉಪಯೋಗಕ್ಕೆ ಸರಳ ಅನ್ನಸೂವು ಈ ಜನವರಿ ಫೆಬ್ರವರಿನೇ. ಚೈತ್ರ ವೈಶಾಖಗಳು ಸ್ವಲ್ಪ ಕಠಿಣ ಅನ್ನಿಸಿ ಬಿಡತಾವ್ರೀ. ವೈಶಾಖ ಶುದ್ಧ ದಶಮಿ, ಭಾದ್ರಪದ ಶುಕ್ಲ ಚೌತಿ, ಶ್ರಾವಣ ಬಹಳ ಅಷ್ಟಮಿ ಹಿಂಗೆಲ್ಲಾ. ಆ ಕೃಷ್ಣ ಪಕ್ಷ ಶುಕ್ಲ ಪಕ್ಷಗಳು, ಶುದ್ಧ ಬಹುಳಗಳು ಸ್ವಲ್ಪ ಕನ್ಫ್ಯೂಸ್ ಆಗಿಬಿಡತಾವ್ರಿ. ಅವು ಸುಮ್ಮ ಮದುವೆ ಮುಂಜವಿಗಳಿಗೆ, ಪೂಜಾ ಪುನಸ್ಕಾರಗಳಿಗೆ, ಲಗ್ನ ಮುಹೂರ್ತಕ್ಕಷ್ಟೇ ಸೀಮಿತವಾಗಿ ಬಿಟ್ಟಾವ. ಹಂಗ ನೋಡಿದ್ರ ಈ ಜನವರಿ ಫೆಬ್ರವರಿಗಳು ದಿನ ಊಟಕ್ಕೆ ಬಳಸುವ ಸ್ಟೀಲ್ ತಟ್ಟೆ ಲೋಟಗಳಾದ್ರ ಈ ಸಂವತ್ಸರೇ, ಅಯನೇ, ಮಾಸೌ, ಪಕ್ಷೇ, ತಿಥೇ, ವಾಸರೌ.. ಎಲ್ಲಾ ಯಾರರೆ ಅತಿಥಿ ಅಭ್ಯಾಗತರು ಬೀಗರು ಬಿಜ್ಜರು ಬಂದಾಗ ಮಾತ್ರ ಹೊರ ತೆಗೆದು ಅವರು ಹೋದ ನಂತರ ಮತ್ತೆ ಕಾಳಜಿಲೆ ಪ್ಯಾಕ್ ಮಾಡಿ ಸ್ವಸ್ಥಾನಕ್ಕೆ ಸೇರಿಸಿಬಿಡುವ ತುಟ್ಟಿ ಡಿನ್ನರ್ ಸೆಟ್ ಗಳ ಗತೆ ಅಂದ್ರ ತಪ್ಪಾಗಲಿಕ್ಕಿಲ್ಲ.
ಆದ್ರೆ ಕೆಲವು ಈ ನಮ್ಮ ಕ್ಯಾಲೆಂಡರ್ ಗಳು ಇರ್ತಾವಲ್ರೀ ‘ ಹೊಂಬಾಳಿ ಬಂಧುಗಳು’, ‘ ಮಹಾಲಕ್ಷ್ಮಿ ದಿನದರ್ಶಿಕೆ’, ‘ಕಾಲ ನಿರ್ಣಯ’ ಇತ್ಯಾದಿ.. ಇವುಗಳು ಮಾಡುವ ಕೆಲಸ ಅನನ್ಯ ನೋಡ್ರಿ ಇವುಗಳೊಳಗ ಜನವರಿ ಫೆಬ್ರವರಿ 1 ರಿಂದ 28,30,31 ದಿನಾಂಕಗಳ ಜೊತೆಗೆ ತಿಥಿ, ನಕ್ಷತ್ರ, ರಾಹುಕಾಲ, ಗುಳಿಕಕಾಲ ಎಲ್ಲಾನೂ ಕೊಟ್ಟಿರ್ತಾರ. ಏನು ಮಾಹಿತಿ ಬೇಕಂದ್ರೂ ತಟ್ಟಂತ ಸಿಕ್ಕಿಬಿಡುತ್ತದ. ಅಡುಗೆಮನೆ ಗ್ವಾಡಿಗೆ ಇಂಥದೊಂದು ಕ್ಯಾಲೆಂಡರ್ ಬೇಕೇ ಬೇಕು ನೋಡ್ರಿ. ರಥ, ಜಾತ್ರಿ, ತೇರು ಏಕಾದಶಿ- ದ್ವಾದಶಿಗಳು, ಹುಣ್ಣಿಮೆ- ಅಮಾವಾಸ್ಯೆಗಳು, ಹಬ್ಬ- ಹರಿದಿನಗಳು, ಆರಾಧನೆ- ವರ್ಧಂತಿಗಳು, ಸಂಕಷ್ಟಿ, ಚಂದ್ರೋದಯ- ಸೂರ್ಯೋದಯಗಳು ಇವುಗಳ ಮಾಹಿತಿ ಗೃಹಿಣಿ ಆದಾಕಿಗೆ ಅವಶ್ಯ ಇರಬೇಕಲ್ರಿ.ಅದಕ್ಕ ಅಡುಗೆಮನ್ಯಾಗೊಂದು ಕ್ಯಾಲೆಂಡರ್ ಇದ್ರ ಅದರ ಮೇಲೆ ಕಣ್ಣು ಹಾಯಕೋತ ಇರ್ತದ. ಇರಲಿಕ್ಕಂದ್ರ ಏಕಾದಶಿ ಮುಂಜಾನೆ ಘಂ ಅಂತ ಉಳ್ಳಾಗಡ್ಡಿ ಉಪ್ಪಿಟ್ಟು ತಯಾರಾಗಿ ಬಿಡುತದ. ಮರುದಿನದ ಹುಣ್ಣಿಮೆಗೆ ಕಾಯಿ ತರೋದು ಮರೆತು ಹೋಗ್ತದ. ಕುಲ ದೇವರ ತೇರು, ಮನೆಯ ಹೆಣ್ಣು ದೇವತೆಯ ಕಾರ್ತಿಕೋತ್ಸವ, ತೆಪ್ಪೋತ್ಸವ ಇವುಗಳೆಲ್ಲ ನೆನಪೇ ಉಳಿಯುವುದಿಲ್ಲ.
ಈ ಕ್ಯಾಲೆಂಡರ್ಗಳ ಬಹುಪಯೋಗ ನಿಮಗೂ ಗೊತ್ತೇ ಇರುತದ್ರಿ. ಅವಸರಕ್ಕ ಬೇಕಂದಾಗ ದಾರದ ಸಮೇತ ಸೂಜಿ, ಟಾಚನಿಗಳು ಸಿಗುವುದು ಇದೇ ಕ್ಯಾಲೆಂಡರಿನಾಗೇರಿ. ತಿಂಗಳ ವರವಿ ಹಾಲು -ಮೊಸರಿನ ಲೆಕ್ಕ, ಇಸ್ತ್ರಿ ಅವನಿಗೆ ಕೊಟ್ಟ ಬಟ್ಟೆಗಳು, ಅವನು ವಾಪಸ್ ಕೊಡಬೇಕಾದ ಚಿಲ್ಲರೆಯ ಲೆಕ್ಕ, ಯಾವುದೋ ಬ್ಲಡ್ ಟೆಸ್ಟ್, ದಂತ ವೈದ್ಯರ ಅಪಾಯಿಂಟ್ಮೆಂಟ್ ದಿನಾಂಕ, ಮಕ್ಕಳ ಶಾಲೆಯ ಪೇರೆಂಟ್ -ಮೀಟಿಂಗ್, ಪಿಕ್ನಿಕ್- ಗ್ಯಾದರಿಂಗು ಇವುಗಳ ದಿನಾಂಕಗಳು, ಯಾರದೋ ಮನೆಯ ಮದುವೆಯ ರಿಸೆಪ್ಶನ್, ಬಂಧುಗಳೊಬ್ಬರ ಸೊಸೆಯ ಶ್ರೀಮಂತದೂಟಕ್ಕೆ ಹೋಗಬೇಕಾಗಿರುವ ದಿನಾಂಕಗಳು, ಕಿರಾಣಿ ಖರೀದಿಸಿದ ದಿನ ಮತ್ತು ಅದರ ಟೋಟಲ್ ರೊಕ್ಕ ( ಯಾಕಂದ್ರೆ ಯಜಮಾನರು ಯಾವಾಗ ಕಿರಾಣಿ ತರಲು ಕರೆದರೂ “ಮನ್ನೀನ ತಂದಿದ್ದೆಲ್ಲಾ 20,000 ಕಿರಾಣಿ ಅಂತಿರ್ತಾರ. ಅವರಿಗೆ ಸಾಕ್ಷಿ ಸಮೇತ ಆ ಹಿಂದಿನ ಡೇಟ್, ದುಡ್ಡು ತೋರಿಸಬೇಕಲ್ರೀ ಅದಕ್ಕ) ಇನ್ನ ಕೆಲಸದ ಗದ್ದಲದಾಗ ಮರೆತು ಬಿಡಬಾರದಂತ ಮನೆಯವರ ಆಫೀಸಿನ ಟೂರಿನ ದಿನಾಂಕ, ತಿಂಗಳ ಮೊದಲೇ ತಮ್ಮ ಆಗಮನದ ಡೇಟ್ ತಿಳಿಸಿದ ಅತಿಥಿಗಳ ಆಗಮನದ ದಿನಾಂಕ, ಅವರ ಟ್ರೈನು, ಬೋಗಿ ನಂಬರ್, ಫ್ಲೈಟು, arrival time, ಟರ್ಮಿನಲ್ ಇತ್ಯಾದಿಗಳ ದಾಖಲಾತಿ ಎಲ್ಲಾ ಇಲ್ಲೇ ಈ ತೂಗಾಡೋ ಕ್ಯಾಲೆಂಡರಿನಲ್ಲೇ. ನಾದಿನಿಯ ಗಂಡ, ತಮ್ಮನ ಹೆಂಡತಿ, ಅಕ್ಕನ ಗಂಡ ಹೀಗೆ ಬಹಳ ಪ್ರಮುಖರಾದವರ ಹುಟ್ಟುಹಬ್ಬ, ಆನಿವರ್ಸರಿ ಮರೆತು ಬಿಡಬಹುದಾದ ಸಾಧ್ಯತೆಗಳೇ ಹೆಚ್ಚು. ಆ ಪ್ರಮಾದಗಳು ಆಗದಂಗ ತಪ್ಪಿಸಲಿಕ್ಕೆ ಈ ಕ್ಯಾಲೆಂಡರ್ ನಾಗ ಮಾರ್ಕ್ ಮಾಡಿ ಇಟ್ಟುಬಿಟ್ಟರ ಆಯ್ತ್ರಿ . ಇನ್ನ ಮನೆ ಕೆಲಸದಕಿ ತಗೊಂಡ ರಜಾ ದಿನಗಳು, ಅಕಿ ಅಡ್ವಾನ್ಸ್ ಆಗಿ ಇಸ್ಕೊಳ್ಳೋ ನೂರು ಇನ್ನೂರು ರೂಪಾಯಿಗಳ ಲೆಕ್ಕಕ್ಕೂ ಈ ಕ್ಯಾಲೆಂಡರ್ ಬೇಕ್ರಿ. ಇಲ್ಲ ಅಂದ್ರ ತಿಂಗಳದಾಗ ನಾಲ್ಕು ದಿನ ರಜಾ ಮಾಡಿ ಅಂತ ನಾನು, ಇಲ್ಲ ಎರಡೇ ದಿನ ಅಂತ ಅಕಿ ಹಾಕ್ಯಾಡೋದು ನಡೀತಿತ್ರೀ. ಆದ್ರ ಯಾವಾಗ ಈ ಕ್ಯಾಲೆಂಡರ್ನಾಗ ಅವೆಲ್ಲ ದಾಖಲಾಗಲಿಕ್ಕೆ ಶುರು ಆಯ್ತೋ ಆಗ ಇಂಥ ಪ್ರಸಂಗಗಳು ಕಡಿಮೆ ಆದ್ವು ಅನ್ರಿ. ಅಷ್ಟೇ ಅಲ್ರಿ ನಾನಂತೂ ಕೆಲವೊಂದು ಅರ್ಜೆಂಟ್, ಎಮರ್ಜೆನ್ಸಿ ಫೋನ್ ನಂಬರ್ ಗಳನ್ನು ಅದರ ಮೇಲೇ ಗೀಚಿರತೀನ್ರಿ. ಫೆಸಿಲಿಟಿ ಆಫೀಸ್, ಗ್ಯಾಸ್ ಸಿಲಿಂಡರ್ ಏಜೆನ್ಸಿ, ಮಿಕ್ಸಿ ರಿಪೇರಿಯವ, ರದ್ದಿ ಪೇಪರಿನವ, ಹೋಂ ಡೆಲಿವರಿ ಮಾಡುವ ಹತ್ತಿರದ ಕಿರಾಣಿ ಅಂಗಡಿಯವ, ಅರ್ಜಂಟಿಗೊದಗುವ ಆಟೋ ಚಾಲಕ, ಡ್ರೈಕ್ಲೀನಿನವ, ಟೇಲರ್, ಬ್ಯೂಟಿ ಪಾರ್ಲರ್ ದಕಿ.. ಹೀಂಗs ನೂರಾ ಎಂಟು ನಂಬರ್.. ಯಾಕ ನಗಲಿಕ್ಹತ್ತೀರೇನು? ಏಯ್ ನಿಮಗೇನ ಗೊತ್ತರೀ ಯಾವ ಟೈ ಮಿನಾಗ ಯಾರಾರ ನಂಬರ್ ಹರಕತ್ ಆಗಿಬಿಡತಾವ ಅಂತ. ಮೊಬೈಲ್ ನಾಗ ಸೇವ್ ಮಾಡಕೋಬಹುದಲಾ ಅಂತೀರೇನು ಅದರ ಕಥಿನೂ ಹೇಳತೀನಿ ತಡೀರಿ. ಮೊಬೈಲ್ ನಾಗ ನಮಗ ಬೇಕಂದಾಗ ಕೆಂಪು ಗೆರಿನೇ.. ಚಾರ್ಜೇ ಇರಂಗಿಲ್ಲ. ನೂರೆಂಟು ಗೇಮ್ಸ್ ಡೌನ್ಲೋಡ್ ಮಾಡಿಕೊಂಡು ಆಡಿ, U tube, google ಜನ್ಮವನ್ನೆಲ್ಲ ಜಾಲಾಡಿ ಬ್ಯಾಟರಿ ಲೋ ಅಂತ ತೋರಿಸಿದ ಕೂಡಲೇ ಎಲ್ಲಿ ಕೂತಿರತಾರೋ ಅಲ್ಲೇ ಅದನ್ನಿಟ್ಟು ಎದ್ದು ಮತ್ತೊಂದು ಅಪ್ಪನದೋ, ಅಜ್ಜನದೋ ಮೊಬೈಲ್ ಅನ್ವೇಷಣೆಗೆ ಹೊರಡೂದು ನಮ್ಮ ಮಕ್ಕಳ ಹುಟ್ಟು ಗುಣಾರೀ. ಎಷ್ಟರ ಬಯ್ಯರಿ, ತಿಳಿಸಿ ಹೇಳ್ರಿ ಏನು ಉಪಯೋಗ ಇಲ್ಲ ರೀ. ಹಿಂಗಾಗಿ ಮೊದಲು ಮೊಬೈಲ್ ಹುಡುಕುವ ಕೆಲಸ ಶುರು ಮಾಡಬೇಕ್ರಿ. ಸೋಫಾ ಸಂದ್ಯಾಗ, ಡೈನಿಂಗ್ ಟೇಬಲ್ ಚೇರ್ ಮ್ಯಾಲೋ, ಮಡಚಿಡಬೇಕು ಎಂದು ಗುಡ್ಡೆ ಹಾಕಿದ ಒಗೆದ ಬಟ್ಟೆಗಳ ರಾಶಿಯಲ್ಲೋ, ರಜಾಯಿಯ ಸುರುಳಿ, ತಲೆದಿಂಬಿನ ಕವರ್ ನಲ್ಲೋ, ಬಚ್ಚಲು ಮನೆಯ ಸಿಂಕಿನ ಬಳಿಯೋ ಎಲ್ಲಿ ಬೇಕಾದರೂ ಪರದೇಶಿಗತೆ ಅದು ಬಿದ್ದಿರಬಹುದಾದ ಸಾಧ್ಯತೆಗಳು ಹೆಚ್ಚರೀ. ಯಾರನ್ನೇ ಕೇಳ್ರಿ ‘ನಾ ನೋಡಿಲ್ಲ.. ಚಿನ್ನು ತಗೊಂಡಿದ್ಲು’, ‘ನಂಗೊತ್ತಿಲ್ಲ.. ಅಣ್ಣಾ ಪಬ್ಜಿ ಆಡಲಿ ಕ್ಹತ್ತಿದ್ದ’, ‘ಇಲ್ಲೇ ಚಾರ್ಜಿಗಿತ್ತು.. ಆಗಳೇ ನೋಡಿದ್ದೆ.’. ಇಂಥವೇ ಉತ್ತರಗಳು. ರಿಂಗ್ ಮಾಡಿದ್ರೆ ಪಾಪ ಗುಟುಕು ಜೀವ ಹಿಡಿದ ಅದಕ್ಕ ರಿಂಗ್ ಆಗುವ ತಾಕತ್ತೂ ಇರುವುದಿಲ್ಲ. ಕೆಲವೊಮ್ಮೆ ಅಂತೂ ನಾನು ಗೇಮ್ ಆಡಿದ್ರ ಬೈತೀನಿ ಅಂತ ಸೈಲೆಂಟ್ ಬೇರೆ ಮಾಡಿರತಾರ. ಹಿಂಗಂತ ಪಾಸ್ವರ್ಡ್ ಹಾಕಿಟ್ರೆ ಆ ನಂಬರು ಪ್ಯಾಟರ್ನ್ ಏನಿತ್ತು ಅಂತ ನಂಗs ನೆನಪಿರುವುದಿಲ್ಲರೀ. ಇನ್ನ ಯಾವುದರ ಡೈರಿನಾಗ ಬರೆದಿಟ್ಟುಕೊಂಡಿದ್ದರೂ ಆ ಡೈರಿ ಹುಡುಕಲಿಕ್ಕೆ ತಾಸು ಬೇಕು. ಯಾಕಂದ್ರ ಮಗಳು ಒಮ್ಮೆ ಅದನ್ನ ತನ್ನ rough note book ಮಾಡಿಕೊಂಡಿರತಾಳ. ಇನ್ನೊಮ್ಮೆ ಮಗ ರಾಯ ಯಾವುದೋ ಹಾಳಿನಾಗ ಯಾರಿಗೋ ಅಡ್ರೆಸ್ ಬರೀಲಿಕ್ಕೆ ಅಂತ ಅದನ್ನ ಪೇಪರ್ ಪ್ಯಾಡ್ ಗತೆ use ಮಾಡಿ ಎಲ್ಲೋ ಸೇರಿ ಸಿಟ್ಟು ಹೋಗಿರುತ್ತಾನೆ. ವೀಕೆಂಡ್ಗೆ ಮನೆಗೆ ಬಂದಿದ್ದ ನಾದಿನಿ ಮಗಳು ಅದನ್ನು ಡ್ರಾಯಿಂಗ್ ಬುಕ್ ಮಾಡಿಕೊಂಡು ಚಿತ್ರ ಗೀಚಿರತಾಳ. ಟೀಪಾಯ್ ಮೇಲಿದ್ರ ಯಾರೋ ಅದನ್ನು ಬಿಸಿ ಚಹಾ ಕಪ್ ಇಡಲಿಕ್ಕೆ ಕೋಸ್ಟರ್ ಗತೆ ಸಹ ಬಳಸಿರತಾರ. ಹೀಂಗಾಗಿ ಇವ್ಯಾವುದರ ಉಸಾಬರಿನೇ ಬ್ಯಾಡ ಅಂತ ‘ಅನ್ಯಥಾ ಶರಣಂ ನಾಸ್ತಿ.. ತ್ವಮೇವ ಶರಣಂ ಮಮ’ ಅಂತ ಈ ಕ್ಯಾಲೆಂಡರಿನ ಮೊರೆ ಹೋಗುವುದೊಂದೇ ದಾರಿ. ನಂಬಿದವರ ಕೈಬಿಡಲಾರದ ದೊಡ್ಡ ಗುಣ ಈ ನಮ್ಮ ಅಡಗಿಮನಿ ಕ್ಯಾಲೆಂಡರಿಗೆ ಅದರೀ.
ಡಿಸೆಂಬರ್ ತಿಂಗಳು ಬಂತಂದ್ರ ಈ ಕ್ಯಾಲೆಂಡರುಗಳ ವ್ಯಾಪಾರದ ಭರಾಟೆ ನೋಡಬೇಕ್ರಿ. ಎಲ್ಲಾ ಸ್ಟೇಷನರಿ ಹಾಗೂ ಪುಸ್ತಕ ಅಂಗಡಿಗಳೊಳಗ ನಾನಾ ನಮೂನಿ ಹೊಚ್ಚ ಹೊಸ ಕ್ಯಾಲೆಂಡರುಗಳು ಮನೆಮನೆಯ ಗೋಡೆಯನ್ನಲಂಕರಿಸಲು ಸಜ್ಜಾಗಿ ಕೂತಿರತಾವ. ವೆಂಕಪ್ಪ, ಹನುಮಪ್ಪ, ಶಿವ, ನರಸಿಂಹ, ಲಕ್ಷ್ಮಿ ಇತ್ಯಾದಿ ದೇವತೆಗಳ ಚಂದದ ಕ್ಯಾಲೆಂಡರ್ ಗಳು. ನಮ್ಮ ಬಾಲ್ಯಕಾಲದ ಎಲ್ಲಾ ಮನೆಯ ಪಡಸಾಲೆಗಳಲ್ಲಿ ಎಲ್ಲಾ ಪ್ರಮುಖ ದೇವತೆ ದೇವತೆಗಳು ಹಿಂಗ ಕ್ಯಾಲೆಂಡರಿನಾಗ ಜೋಕಾಲಿ ಆಡುತ್ತಿದ್ದರು. ನಾವು ಹೊರಹೋಗಲು ಚಪ್ಪಲಿ ಮೆಟ್ಟುವುದಕ್ಕಿಂತ ಮೊದಲು ತಪ್ಪದೇ ಈ ಜೀಕುವ ದೇವರಿಗೆ ಕೈಮುಗಿದೇ ಹೋಗುತ್ತಿದ್ವಿ. ಕೈ ಮುಗಿದೀದ್ದರೂ ಕಡೀಕೆ ಕಣ್ರೆಪ್ಪೆ ಮುಚ್ಚಿ ತೆಗೆದಾದರೂ ಸಾಂಕೇತಿಕ ನಮಸ್ಕಾರ ಸಲ್ಲಿಸಿಯೇ ಹೊರಗಡಿ ಇಡುತ್ತಿದ್ದು. ಎಲ್ಲ ದೇವಾನುದೇವತೆಗಳ ರೂಪ, ಮೈಬಣ್ಣ, ಅವರ ಆರು-ಮೂರು- ನಾಲ್ಕು ತಲೆಗಳು, ಚತುರ್ ಷಡ್ ಭುಜಗಳು,ಶಂಖ- ಚಕ್ರ- ಗದಾ- ತ್ರಿಶೂಲಾದಿ ಆಯುಧಗಳು, ಗರುಡ -ನಂದಿ- ನವಿಲು -ಇಲಿ ಇತ್ಯಾದಿ ಅವರ ಸ್ಪೆಸಿಫಿಕ್ ಆದ ವಾಹನಗಳು, ಅವರು ನುಡಿಸುವ ಕೊಳಲು, ವೀಣೆ ಇತ್ಯಾದಿ ವಾದ್ಯಗಳು,ಆಭರಣಗಳು, ಉಡುಗೆತೊಡುಗೆಗಳು ನಮ್ಮ ಅರಿವಿನ ವಲಯಕ್ಕೆ ತಲುಪಿದ್ದೇ ಈ ಕ್ಯಾಲೆಂಡರುಗಳಿಂದ. ಒಂದರ್ಥದಲ್ಲಿ ದೇವ ದರುಶನ ಮಾಡಿಸಿದ ಗುರು ಸ್ಥಾನ ಸಲ್ಲಬೇಕಿವಕ್ಕೆ. ಎಷ್ಟೋ ಚೆಂದದ ಕ್ಯಾಲೆಂಡರ್ ಗಳು ಕಟ್ ಹಾಕಿಸಿಕೊಂಡು ದೇವರ ಫೋಟೋ ಆಗಿ ಸೀದಾ ದೇವರ ಮನೆಗೆ ಬಡ್ತಿ ಪಡೆಯುತ್ತಿದ್ದವು. ಈಗಲೂ ನನ್ನ ಅಡುಗೆ ಮನೆಯಲ್ಲಿ ವಿರಾಜಮಾನವಾಗಿರುವ 2014ನೇ ಇಸ್ವಿಯ, ಬರ್ಮೀಂಗ್ ಹ್ಯಾಮಿನ ದೇವಸ್ಥಾನದ ಕ್ಯಾಲೆಂಡರಿನ ವೆಂಕಪ್ಪನ ಪಾದಸ್ಪರ್ಶದಿಂದಲೇ ನಮ್ಮ ದಿನಚರಿ ಆರಂಭ ಆಗುತ್ತದೆ. ಯಾಕಂದ್ರ ನಮ್ಮ ಕುಲದೈವರೀ ವೆಂಕಪ್ಪ. ನಾವೂ ಅವನ ಒಕ್ಕಲದವರೇ.. ಅಷ್ಟೇ ಅಲ್ಲ ಬಹಳಷ್ಟು ಸಾಮ್ಯ ಅವರೀ ನಮಗೂ ಅವಗೂ. ನಾವು ಎಲ್ಲರs ಹೊರಗೆ ಹೊಂಟ್ರ ಅವನ ಹಂಗ ಸಿರಿ -ಗರುಡ- ಶೇಷ- ವಾಯು- ಬ್ರಹ್ಮಾದಿಗಳ ಸುರವರ ಪರಿವಾರ ಸಮೇತ ಹೊಂಡಿತೀವ್ರಿ. ಕನಿಷ್ಠ ಪಕ್ಷ ಎಂಟು 10 ಮಂದಿ ಅಂತೂ ಇರಬೇಕು. ಹಿಂಗಾಗಿ ಖರೆ ಹೇಳ್ತಿನ್ರಿ ಮಂದಿ ನಮ್ಮನ್ನು ತಮ್ಮ ಮನೆಗೆ ಛಾಕ್ಕ ಸಹಿತ ಕರೀಲಿಕ್ಕೆ ಅಂಜತಾರ್ರೀ. ಮತ್ತ ಹತ್ತಾರು ಮೂಲಗಳಿಂದ ಸಾಕಷ್ಟು ಬೇಕಾದಷ್ಟು ಆದಾಯ ಇದ್ದರೂ ವೆಂಕಪ್ಪ ಸದಾ ಸಾಲಗಾರನೇ. ನಾವೂ ಹಂಗs ಆದಾಯದ ಸ್ರೋತ್ರಗಳೆಷ್ಟೇ ಇರಲಿ ನಮ್ಮ ಕ್ರೆಡಿಟ್ ಮುಗಿಯೋದೇ ಇಲ್ರೀ , ಹೋಂ ಲೋನ್, ಕಾರ್ ಲೋನ್, ಪರ್ಸನಲ್ ಲೋನ್, ಕ್ರೆಡಿಟ್ ಕಾರ್ಡ್ ಲೋನ್ ಎಷ್ಟೆಷ್ಟು ಪ್ರಕಾರದ ಲೋನ್ ಗಳು ಅವನೋ ಅಷ್ಟೆಲ್ಲಾ ತರ ಲೋನ್ಗಾರರು ನಾವು. ಇರಲಿ ಬಿಡ್ರಿ ವಿಷಯ ಎಲ್ಲಿಂದೆಲ್ಲೋ ಹೊಂಟತು ಕ್ಯಾಲೆಂಡರ್ ಬಿಟ್ಟು.
ಚಂದ ಚಂದ ನೆಯ ನೀಲಿ ಆಗಸ, ನೀಲಿ ಕಡಲು, ಬೆಟ್ಟ,ಹಸಿರು ವನಗಳು, ಬಣ್ಣಬಣ್ಣದ ಹೂಗಳಂಥ ನಿಸರ್ಗ ಸೌಂದರ್ಯದ ಕ್ಯಾಲೆಂಡರ್ ಗಳು, ಪ್ರಾಣಿ-ಪಕ್ಷಿಗಳ ಕ್ಯಾಲೆಂಡರ್ ಗಳು, ಮುದ್ದು ಮುದ್ದಾದ ಪುಟ್ಟ ಮಕ್ಕಳ ಕ್ಯಾಲೆಂಡರ್ ಗಳು, ರವಿವರ್ಮನ ಪೇಂಟಿಂಗ್ ಗಳ ಚಿತ್ರವಿರುವ ಕ್ಯಾಲೆಂಡರ್ ಗಳು, ಮೈಸೂರ ಅರಮನೆ, ತಾಜ್ಮಹಲ್, ಗೋಲ್ ಗುಂಬಜ್, ಹಂಪಿಯ ಕಲ್ಲಿನ ರಥವಿರುವಂತಹ ಐತಿಹಾಸಿಕ ಸ್ಮಾರಕಗಳ ಕ್ಯಾಲೆಂಡರ್ ಗಳು, ಸ್ವಾತಂತ್ರ್ಯ ಯೋಧರ, ಸಾಹಿತಿಗಳ, ಕವಿಗಳ ಕ್ಯಾಲೆಂಡರ್ ಗಳು, ಸಿನಿಮಾ ನಟ- ನಟಿಯರ ಕ್ಯಾಲೆಂಡರ್ ಗಳು, ತುಂಡುಡುಗೆಯಲ್ಲಿ ದೇಹಸಿರಿ ಪ್ರದರ್ಶಿಸುವ ರೂಪದರ್ಶಿಗಳ ಮಾದಕ ಕ್ಯಾಲೆಂಡರ್ ಗಳು ಓಹ್! ಎಷ್ಟೆಲ್ಲಾ ವೈವಿಧ್ಯಮಯ.. ಎಷ್ಟೋ ನಮಗೆ ಪ್ರಿಯವಾದ ನಟ ನಟಿಯರ, ಧೀಮಂತ ವ್ಯಕ್ತಿಗಳ, ನಿಸರ್ಗ ಚಿತ್ರಗಳ ಕ್ಯಾಲೆಂಡರ್ ಅನ್ನು ಪುಸ್ತಕ- ನೋಟ್ಬುಕ್ಕುಗಳಿಗೆ ಕವರ್ ಹಾಕಲು ಉಪಯೋಗಿಸಿದ್ದಿದೆ. ಬರೀ ಗೋಡೆಗೆ ತೂಗು ಹಾಕುವ ಕ್ಯಾಲೆಂಡರ್ಗಳಷ್ಟೇ ಅಲ್ಲ ಟೇಬಲ್ ಮೇಲೆ ಇಡಬಹುದಾದ ಕ್ಯಾಲೆಂಡರ್ ಗಳು ಇರ್ತಾವ. ಎಷ್ಟೋ ಬ್ಯಾಂಕು, ಎಲ್ಐಸಿ, ಪ್ರೈವೇಟ್ ಕಂಪನಿಗಳು ತಮ್ಮದೇ ಲೇಬಲ್ ನಡಿಯಲ್ಲಿ ಕ್ಯಾಲೆಂಡರ್ ಮಾಡಿಸುವುದು ಸರ್ವೇಸಾಮಾನ್ಯ. ಇನ್ನು ಕೆಲವೊಬ್ಬ ಸ್ಥಿತಿವಂತರು ತಮ್ಮ ಮದುವೆಯ, ಮಕ್ಕಳ ಚಿತ್ರಗಳನ್ನು ಒಳಗೊಂಡ ತಮ್ಮದೇ ಆದ ಕ್ಯಾಲೆಂಡರ್ ಮಾಡಿಸಿಕೊಂಡು ತಮ್ಮ ಬಂಗಲೆ ಅಂಥ ಮನೆಯ ಲಿವಿಂಗ್ ರೂಮ್ನಲ್ಲೋ, ಬೆಡ್ರೂಮ್ ನಲ್ಲೋ ಹಾಕಿರತಾರ.
ಮಜಾ ಅಂದ್ರ ಕ್ಯಾಲೆಂಡರಿನ ಮುಂಭಾಗದಷ್ಟೇ ಹಿಂಭಾಗವೂ ಅತ್ಯಂತ ಆಸಕ್ತಿದಾಯಕ ವಿಷಯಗಳನ್ನು ಒಳಗೊಂಡಿರುತದ ಅನ್ನೋದು ನಿಮಗೂ ಗೊತ್ತೇ ಇರುತ್ತದ. ರಾಶಿ ಭವಿಷ್ಯ, ತಲೆನೋವಿನಿಂದ ಮೂಲವ್ಯಾಧಿ ತನಕ ಎಲ್ಲಾ ಜಡ್ಡುಗಳಿಗೂ ಮನೆಮದ್ದುಗಳು, ಗೋದಿ- ಜೋಳದಾಗ ನುಶಿ ಆದ್ರ, ಬ್ಯಾಳಿ- ಕಾಳಿನಾಗ ಬುರಬುರಿ, ಹಾರೋ ಹುಳ, ರವಾದಾಗ ಬಾಲ ಹುಳ ಆದರೆ ಏನು ಮಾಡಬೇಕು, ತಲ್ಯಾಗ ಹೇನು ಆದ್ರ ಏನು ಮಾಡಬೇಕು, ಮನ್ಯಾಗ ಜೊಂಡಿಗ್ಯಾ,ಹಲ್ಲಿ ಹಾವಳಿಯಾದ್ರ ಏನು ಮಾಡಬೇಕು, ಹೊಲದಾಗಿನ ಯಾವ ಬೆಳೀಗೆ ಯಾವ ಗೊಬ್ಬರ ಹಾಕಬೇಕು, ಮುಖದ ಮೇಲೆ ಮೊಡವಿಗಳಾದ್ರ.. ತಲೆ ಕೂದಲು ಉದುರಿದರ..ತ್ವಚೆ ಕಾಂತಿಹೀನವಾದ್ರಏನೇನೆಲ್ಲ ಮಾಡಬೇಕು?, ಗ್ರಹಣವಾದಾಗ ಏನು ತಿನ್ನಬೇಕು, ಯಾವಾಗ ತಿನ್ನಬೇಕು, ಏನೇನು ದಾನ ಕೊಡಬೇಕು ಎಲ್ಲದರ ವಿವರಣೆ ಇರತದ. ಹಲ್ಲಿ ಮೈಮೇಲೆ ಬಿದ್ರ, ಬೆಕ್ಕು ಅಡ್ಡ ಹೋದ್ರಾ , ನಾಯಿ ಊಳಿಟ್ಟರ, ಮನೆ ಮುಂದೆ ಆಕಳು ಸಗಣಿ ಹಾಕಿ ಹೋಗಿದ್ರ, ಬಲಗಣ್ಣು ಅದುರಿದ್ರ, ಎಡಗಾಲು ತುರಿಸಿದ್ರ.. ಹಿಂಗ ಹತ್ತು ಹಲವಾರು ಶಕುನ ಫಲಗಳು.. ಕನಸಿನಾಗ ತುಂಬಿದ ಕೊಡ ಬಂದ್ರ, ಹಾವು ಬಂದ್ರ, ದೇವರು ಬಂದ್ರ, ಸತ್ತ್ರ, ಎದ್ರ, ಬಿದ್ರ ಅಂತೆಲ್ಲ 108 ಸ್ವಪ್ನ ಫಲಗಳು.. ಮುಂಗಾರು ಹಿಂಗಾರು ಮಳೆ, ನಕ್ಷತ್ರಗಳ ವಿವರಣೆ, ಮಳೆಯ ಸಂಭವನೀಯತೆಗಳು.. ಕೃಷ್ಣಾರ್ಘ್ಯ ಮಂತ್ರ, ಕಾರ್ತಿಕ ಸ್ನಾನದ ಮಂತ್ರ, ನಷ್ಟವಸ್ತು ಸಿಗುವ ಕಾರ್ತವೀರ್ಯಾರ್ಜುನ ಮಂತ್ರ, ಲಗ್ನ ಮುಹೂರ್ತಗಳು, ಪ್ರಯಾಣಕ್ಕೆ ಶುಭ ತಿಥಿ, ಶುಭ ನಕ್ಷತ್ರಗಳ ವಿವರಣೆ , ವಾಸ್ತು ಪುರುಷ ತೇಜಿ ಮಂದಿ ಏನುಂಟು ಏನಿಲ್ಲ ನನಗಂತೂ ಹೊಸ ಕ್ಯಾಲೆಂಡರ್ ಬಂದೊಡನೆ ಅದರ ಹಿಂಪುಟಗಳನ್ನು ತಿರುಗಿಸಿ ನೋಡುವುದೇ ಅಲ್ಲಲ್ಲ ಓದುವುದೇ ಕೆಲಸ. ಈಗೀಗ ಮೊಬೈಲ್ನಾಗೂ ಆಯಾ ವರ್ಷದ ಕ್ಯಾಲೆಂಡರ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಒಂದು ಬಟ್ಟೊತ್ತಿದರೆ ಸಾಕು ಎಲ್ಲ ಮಾಹಿತಿ ಪಡೆಯಬಹುದು. ಆದರೆ ಗ್ವಾಡಿಗೆ ಮಳಿ ಹೊಡೆದು ತೂಗು ಹಾಕಿದ ಆ ಕ್ಯಾಲೆಂಡರ್ ನ ಮಜಾ ಖಂಡಿತ ಅದರಾಗಿಲ್ಲ. ಯಾಕಂದ್ರ ನಾ ಈ ಹಿಂದೆ ಹೇಳಿದ ಸೂಜಿ ಚುಚ್ಚುವುದೇ ಮುಂತಾದ ಯಾವ ಬಹುಪಯೋಗಿ ಕೆಲಸಕ್ಕೂ ಅದು ಬರಂಗಿಲ್ಲ.
ಒಟ್ಟಿನಾಗ ಕ್ಯಾಲೆಂಡರ್ ನಮ್ಮ ನಿಮ್ಮೆಲ್ಲರ ಜೀವನದ ಒಂದು ಅವಿಭಾಜ್ಯ ಅಂಗ ಅನ್ನೂದರಾಗ ಎರಡು ಮಾತಿಲ್ಲ ಕಾಲ ದೇಶ ಯಾವುದರ ಇರಲಿ ಗ್ವಾಡಿ ಮೇಲೆ ಕ್ಯಾಲೆಂಡರ್ ಇರಲಿ ಅಂತ ಹೇಳುತ್ತಾ ನನ್ನ ಹರಟಿಗೆ ಮಂಗಳ ಹಾಡುತೀನಿ.
ಕಳೆದ ತಿಂಗಳು ಬ್ರಿಟನ್ನಿನ ವೇಲ್ಸ್ ಪ್ರಾಂತದ ಹೆಮ್ಮೆಯ ಪುತ್ರ ಮತ್ತು ಸುಪ್ರಸಿದ್ಧ ಹಾಲಿವುಡ್ ನಟನಾಗಿದ್ದ ರಿಚರ್ಡ್ ಬರ್ಟನ್ ಹುಟ್ಟಿ ನೂರು ವರ್ಷಗಳಾಗಿವೆ. ಆತನ ನೆನಪಿನಲ್ಲಿ ಆತನ ಜನ್ಮಸ್ಥಳದ ಪಕ್ಕದ ದೊಡ್ಡ ಪಟ್ಟಣವಾದ ನೀತ್ ಪೋರ್ಟ್ ಟಾಲ್ಬಟ್ಟಿನವರು ಅನೇಕ ರೀತಿಯಿಂದ ವೈಭವದಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಶಾಲಿನಿಯವರು ಅಲ್ಲಿಗೆ ಭೇಟಿಕೊಟ್ಟ ನೆನಪುಗಳನ್ನು ತಮ್ಮ ತಂದೆಯವರ ನೆನಪಿನಲ್ಲಿ ಭಾವಪೂರ್ಣ ಲೇಖನದಲ್ಲಿ ಗೌರವಾರ್ಪಣೆ (homage) ಸಲ್ಲಿಸುತ್ತಿದ್ದಾರೆ. ಇದರೊಂದಿಗೆ ನನ್ನ ಕೆಲವು ನೆನಪುಗಳನ್ನು ಲಗತ್ತಿಸಿದ್ದೇನೆ! ಅದರ ನಂತರ ಬಹಳ ದಿನಗಳಾದ ಮೇಲೆ ಡಾ ರಾಜಶ್ರೀ ಪಾಟೀಲ ಅವರು ಬರೆದ ಎರಡು ಕವಿತೆಗಳನ್ನೂ ಓದಿರಿ. ಎಂದಿನಂತೆ ನಿಮ್ಮ ಪ್ರೋತ್ಸಾಹ ಮತ್ತು ಪ್ರತಿಕ್ರಿಯೆಗೆ ಯಾವಾಗಲೂ ಸ್ವಾಗತ -(ಸಂ)
ಭಿತ್ತಿ ಭರ್ತಿ ತುಂಬಿದ ಬೃಹದ್ ರಿಚರ್ಡ್ (ಚಿತ್ರ೧: ಲೇಖಕಿ)
ಪೋರ್ಟ್ ಟಾಲ್ಬಟ್—ಟಾಟಾ ಸ್ಟೀಲ್ ಕಾರ್ಖಾನೆ, ಜಗತ್ತಿನ ಅತಿ ದೊಡ್ಡ ಕಾರ್ಖಾನೆಗಳಲ್ಲಿ ಒಂದಾಗಿ, ಇತ್ತೀಚಿನ ವರ್ಷಗಳಲ್ಲಿ ಸುದ್ದಿಯಲ್ಲಿರುವುದರಿಂದ ನಾವು ಈ ಹೆಸರನ್ನು ಹೆಚ್ಚು ಕೇಳುತ್ತಿದ್ದೇವೆ. ಈ ಸ್ಥಳವನ್ನು ಅನ್ವೇಷಿಸಲು ಮುಂದಾದಾಗ, ಇನ್ನೂ ಅನೇಕ ಕಥೆಗಳು ಹೊರಬರುತ್ತವೆ. ನನ್ನ ಬಾಲ್ಯದ ನೆನಪುಗಳನ್ನು ಜೋಡಿಸಲು ನಾನು ಪ್ರಯತ್ನಿಸಿದ್ದೇನೆ. ಪೋನ್ಟ್ರೈಡಿವೆನ್ (Pontrhydyfen) ದಕ್ಷಿಣ ವೇಲ್ಸ್ನ ನೀತ್ ಪೋರ್ಟ್ ಟಾಲ್ಬಟ್ ಪ್ರದೇಶದ ಆವಾನ್ ಕಣಿವೆಯಲ್ಲಿರುವ ಸುಂದರವಾದ ಚಿಕ್ಕ ಹಳ್ಳಿ, ಕಾರ್ಡಿಫ್ನಿಂದ ಸುಮಾರು 40 ಮೈಲಿಗಳ ದೂರದಲ್ಲಿದೆ. ಸುಮಾರು ನೂರು ವರ್ಷಗಳ ಹಿಂದೆ ಈ ಹಳ್ಳಿ ಕಲ್ಲಿದ್ದಲಿ ಗಣಿಯ ಪ್ರದೇಶವಾಗಿತ್ತು. ಆ ಗಣಿಗಾರ (miners)ರಲ್ಲಿ ಒಬ್ಬರ ಮಗನು ಈ ಪ್ರದೇಶದಲ್ಲಿ ಮಾತ್ರವಲ್ಲ, ಜಗತ್ತಿನ ಪ್ರಸಿದ್ಧ ವ್ಯಕ್ತಿಯಾಗಿಯೂ ಬೆಳೆದನು. ರಿಚರ್ಡ್ ವಾಲ್ಟರ್ ಜೆಂಕಿನ್ಸ್ ಎಂಬ ಹೆಸರಿನಲ್ಲಿ ಜನಿಸಿದ ಆ ಹುಡುಗನು ನಂತರ ಹಾಲಿವುಡ್ನ ಪ್ರಸಿದ್ಧ ನಟ ರಿಚರ್ಡ್ ಬರ್ಟನ್ ಆಗಿ ಬೆಳೆಯುವನು. ರಿಚರ್ಡ್ ಬರ್ಟನ್ ರ ಅದ್ಭುತ ಅಭಿನಯ ಶೈಲಿ, ಶಕ್ತಿಯುತ ಧ್ವನಿ ಮತ್ತು ಎಲಿಜಬೆತ್ ಟೇಲರ್ ಅವರೊಂದಿಗೆ ನಡೆದ ವಿವಾಹ (ಎರಡು ಬಾರಿ) —ಅವರನ್ನು ಪ್ರಸಿದ್ಧ “ಗೋಲ್ಡನ್ ಕಪಲ್” ಆಗಿ ಮಾಡಿದ್ದು—ಇಂದಿಗೂ ಎಷ್ಟೋ ಸಿನಿಮಾ ಪ್ರೇಮಿಗಳಿಗೆ ಮರೆಯಲಾಗದ ನೆನಪುಗಳಾಗಿವೆ.
1943ರಲ್ಲಿ ಲಂಡನ್ನ ಸೆಂಟ್ ಮಾರ್ಟಿನ್ ಥಿಯೇಟರ್ನಲ್ಲಿ ವೇದಿಕೆಯ ಮೇಲೆ ಮೊದಲ ಬಾರಿಗೆ ರಿಚರ್ಡ್ ಬರ್ಟನ್ ಅಭಿನಯಿಸಿದರು. ಆರು ವರ್ಷಗಳ ನಂತರ, 1949ರಲ್ಲಿ, ದಿ ಲಾಸ್ಟ್ ಡೇಸ್ ಆಫ್ ಡೋಲ್ವಿನ್ ಅವನ ಮೊದಲ ಚಿತ್ರವಾಗಿತ್ತು. ದಿ ರೋಬ್ (1953), ಕ್ಲಿಯೋಪಾತ್ರಾ (1963) ಎಲಿಜಬೆತ್ ಟೇಲರ್ ಜೊತೆ, ಮತ್ತು ವೇರ್ ಈಗಲ್ಸ್ ಡೇರ್ (1968) ಕ್ಲಿಂಟ್ ಈಸ್ಟ್ವುಡ್ ಜೊತೆ— ನೋಡಬೇಕಾದ ಕ್ಲಾಸಿಕ್ಸ್ (classics ). ಇಷ್ಟು ಹಳೆಯ ನಟನನ್ನು ನಾನು ಹೇಗೆ ನೆನೆದುಕೊಂಡೆ? ಎರಡು ಕಾರಣಗಳಿವೆ. ಮಿಸ್ಟರ್ ಬರ್ಟನ್ ಎಂಬ ಚಿತ್ರ ಏಪ್ರಿಲ್ 2025ರಲ್ಲಿ ಬಿಡುಗಡೆಯಾಯಿತು. ನಾನು ಅದನ್ನು ಮೊದಲ ದಿನ, ಮೊದಲ ಪ್ರದರ್ಶನದಲ್ಲೇ ನೋಡಿದೆ. ಅದು ನನಗೆ ಉತ್ಸಾಹ ಮತ್ತು ಭಾವನೆಗಳ ಅಲೆಗಳನ್ನು ತಂದಿತು. ನನ್ನ ತಂದೆಯಿಂದ ನನಗೆ ರಿಚರ್ಡ್ ಬರ್ಟನ್ ಅವರ ಬಗ್ಗೆ ತಿಳಿದುದ್ದು. ನಾನು ಚಿಕ್ಕವಳಾಗಿದ್ದಾಗ ನನ್ನ ತಂದೆ ಅವರ ಬಗ್ಗೆ ಚರ್ಚಿಸುತ್ತಿದ್ದುದನ್ನು ಮಸುಕಾಗಿ ನೆನಪಿಸಿಕೊಳ್ಳುತ್ತೇನೆ. ಅನೇಕ ವರ್ಷಗಳ ನಂತರ, ನಾನು ವೇಲ್ಸ್ನಲ್ಲಿ ವಾಸಿಸಲು ಬಂದಾಗ, ಕಾರ್ಡಿಫ್ನ ರಾಯಲ್ ವೆಲ್ಶ್ ಕಾಲೇಜ್ ಆಫ್ ಮ್ಯೂಸಿಕ್ ಅಂಡ್ ಡ್ರಾಮಾದ ಉಪನ್ಯಾಸ ಸಭಾಂಗಣಕ್ಕೆ ಭೇಟಿ ನೀಡಿದಾಗ, ಅದನ್ನು ರಿಚರ್ಡ್ ಬರ್ಟನ್ ಥಿಯೇಟರ್ ಎಂದು ಹೆಸರಿಸಲಾಗಿದೆ ಎಂದು ಕಂಡೆ. ಆ ಕ್ಷಣದಲ್ಲಿ ನನ್ನ ತಂದೆಯನ್ನು ನೆನಪಿಸಿಕೊಂಡು ನನಗೆ ಅಪಾರ ಸಂತೋಷವಾಯಿತು.
ಮಿಸ್ಟರ್ ಬರ್ಟನ್ ಚಿತ್ರವು ರಿಚರ್ಡ್ ಬರ್ಟನ್ ಅವರ ಜೀವನವನ್ನು ವಿವರಿಸುತ್ತದೆ—ಪೋನ್ಟ್ರೈಡಿವೆನ್ ಹಳ್ಳಿಯಿಂದ ಇಂಗ್ಲೆಂಡ್ನ ರಂಗಮಂದಿರಗಳವರೆಗೆ ಯುವಕ ರಿಚರ್ಡ್ ಜೆಂಕಿನ್ಸ್ ಅವರ ಜೀವನದಲ್ಲಿ ಅವರ ಶಾಲಾ ಶಿಕ್ಷಕರು ಪ್ರೇರಣಾದಾಯಕ ಪಾತ್ರ ವಹಿಸಿದರು—ಅವರ ಪ್ರತಿಭೆಯನ್ನು ಗುರುತಿಸಿ, ಅಭಿನಯವನ್ನು ಮುಂದುವರಿಸಲು ಪ್ರೋತ್ಸಾಹಿಸಿ, “ಬರ್ಟನ್” ಎಂಬ ತಮ್ಮ ಹೆಸರನ್ನೂ ನೀಡಿದರು. ಅವರ ಆಳವಾದ, ಪ್ರತಿಧ್ವನಿಸುವ ಧ್ವನಿ ಅವರ ಖ್ಯಾತಿಯನ್ನು ಇನ್ನಷ್ಟು ಹೆಚ್ಚಿಸಿತು.
ಈ ಚಿತ್ರವನ್ನು ನೋಡಿದ ನನಗೆ ರಿಚರ್ಡ್ ಬರ್ಟನ್ ಅವರ Pontrhydyfen ಪಾಂಟ್ರಿಡ್ ವೆನ್ (ವೆಲ್ಶ್ ಭಾಷೆಯಲ್ಲಿ ’f’ ಗೆ ವ ಎನ್ನುವ ಉಚ್ಚಾರ) ಜನ್ಮಸ್ಥಳವನ್ನು ಅನ್ವೇಷಿಸಲು ಪ್ರೇರಣೆ ನೀಡಿತು. ಈ ವರ್ಷ 2025 ಅವರ ಜನ್ಮ ಶತಮಾನೋತ್ಸವದ ಸಂದರ್ಭವಾಗಿದ್ದು, ಪೋರ್ಟ್ ಟಾಲ್ಬಾಟ್ ಕೌನ್ಸಿಲ್ ಅನೇಕ ಸಂಬಂಧಿತ ಸ್ಥಳಗಳನ್ನು ‘ರಿಚರ್ಡ್ ಬರ್ಟನ್ ಟ್ರೈಲ್(trail)’ ಆಗಿ ಏರ್ಪಡಿಸಿದೆ.
ಮೇಲಿನ ಚಿತ್ರ-ಲೇಖಕಿ ಕೃಪೆ: ಇಂದಿನ ದೃಶ್ಯ; ಕೆಳಗೆ: ರಿಚರ್ಡ್ ಮತ್ತು ತಂದೆ ತನ್ನೂರಿನ ಅದೇ ಸೇತುವೆಯ ಮೇಲೆ c1950 ದಶಕದಲ್ಲಿ.
ಮೇ ತಿಂಗಳಲ್ಲಿ, ವಸಂತಕಾಲದಲ್ಲಿ ನಾನು ಪೋನ್ಟ್ರೈಡಿವೆನ್ಗೆ ಭೇಟಿ ನೀಡಿದೆ. ಮೈನರ್ಸ್ ಆರ್ಮ್ಸ್ ಪಬ್ ಮುಂದೆ ಕಾರನ್ನು ನಿಲ್ಲಿಸಿದ ಕೂಡಲೇ ಎದುರು ಕಂಡ ದೃಶ್ಯ ಅದ್ಭುತವಾಗಿತ್ತು: ಪಬ್ ಪಕ್ಕದ ಸಂಪೂರ್ಣ ಗೋಡೆಯ ಮೇಲೆ ರಿಚರ್ಡ್ ಬರ್ಟನ್ ಅವರ ಜೀವಂತ ಗಾತ್ರದ ಚಿತ್ರ! (ಚಿತ್ರ 1). ಸ್ವಲ್ಪ ದೂರದಲ್ಲಿ 2 ಡಾನ್-ಯ-ಬೋಂಟ್ ರಿಚರ್ಡನ ಜನ್ಮಸ್ಥಳದಲ್ಲಿ ಅವನು ಹುಟ್ಟಿದ ಮನೆ, ಈಗ ಪ್ರಸಿದ್ಧವಾದ ರಿಚರ್ಡ್ ಬರ್ಟನ್ ಸೇತುವೆ (ಚಿತ್ರದಲ್ಲಿ ಆತ ತಂದೆಯ ಜೊತೆಗೆ ವಾಕಿಂಗ್ ಮಾಡಿದ್ದು ಮತ್ತು ಅದರ ಇಂದಿನ ದೃಶ್ಯ ಇವೆ) ಹತ್ತಿರದಲ್ಲಿದೆ. 1950ರ ದಶಕದಲ್ಲಿ ರಿಚರ್ಡ್ ಬರ್ಟನ್ ತಮ್ಮ ತಂದೆಯೊಂದಿಗೆ ಈ ಸೇತುವೆಯನ್ನು ದಾಟುತ್ತಿರುವ ಐಕಾನಿಕ್ ಛಾಯಾಚಿತ್ರ ಇದೆ. ಸೇತುವೆಯ ಪಕ್ಕದಲ್ಲಿರುವ ಬೆಥೆಲ್ ಚಾಪೆಲ್ ನಲ್ಲಿ ಅವರ ಸ್ಮರಣಾರ್ಥ ಸೇವೆ ನಡೆಯಿತು. ಈಗ ಅದಕ್ಕೆ ಹೊಂದಿಕೊಂಡಿರುವ ಕೆಫೆ ಇದೆ, ಅಲ್ಲಿ ಅವರಿಗಾಗಿ ಮೀಸಲಾದ ಒಂದು ಜಾಗವನ್ನು ನೋಡಿದೆ. ಈ ಕೆಫೆಯನ್ನು ‘ಮಿಸ್ಟರ್ ಬರ್ಟನ್’ ಚಿತ್ರದ ಚಿತ್ರೀಕರಣದ ವೇಳೆ ಗ್ರೀನ್ ರೂಮ್ ಆಗಿ ಬಳಸಲಾಗಿತ್ತೆಂದು ನನಗೆ ತಿಳಿಸಲಾಯಿತು.
ಪೋರ್ಟ್ ಟಾಲ್ಬಾಟ್ ಕೌನ್ಸಿಲ್ ಶತಮಾನೋತ್ಸವದ ಅಂಗವಾಗಿ ನಿರ್ಮಿಸಿದ ಲೋಹದ ಶಿಲ್ಪವೂ ಅಲ್ಲಿ ಇದೆ. ರಿಚರ್ಡ್ ಬರ್ಟನ್ ತಮ್ಮದೇ ಶಬ್ದಗಳಲ್ಲಿ ನೆನಪಿಸಿಕೊಂಡಂತೆ: “ಇದು ತುಂಬಾ ರೊಮ್ಯಾಂಟಿಕ್ ಮತ್ತು ಮೂರ್ಖತನದಂತೆ ಕೇಳಿಸುತ್ತದೆ, ಆದರೆ ನಿಜವಾಗಿ ನಾನು ಬೆಟ್ಟದ ಮೇಲೆ ಹೋಗಿ ನನ್ನ ಧ್ವನಿ ನೋವು ಕಾಣುವವರೆಗೆ ಸಾಧ್ಯವಾದಷ್ಟು ಜೋರಾಗಿ ಕೂಗುತ್ತಿದ್ದೆ. ನಂತರ ಸ್ವಲ್ಪ ವಿರಾಮ ತೆಗೆದುಕೊಂಡು ಮತ್ತೆ ಕೂಗುತ್ತಿದ್ದೆ, ಅದು ನೋವು ಕಾಣದಂತೆ ಮಾಡಲು. ಇದು ತುಂಬಾ ಮೂಲಭೂತ ವಿಧಾನವಾಗಿತ್ತು, ಆದರೆ ಅದು ಕೆಲಸ ಮಾಡಿತು.” ನಿಜವಾಗಿಯೂ, ಅವರದು ಪ್ರತಿಯೊಂದು ಪೀಳಿಗೆಯನ್ನೂ ಆಕರ್ಷಿಸುವ ಧ್ವನಿ, ಅಲ್ಲವೇ!
ಪೋರ್ಟ್ ಟಾಲ್ಬಾಟ್ನ ಅದ್ಭುತ ಕಣಿವೆಗಳು. ನನ್ನ ನೆಚ್ಚಿನ ನಟರಲ್ಲಿ ಒಬ್ಬರಾದ ಸರ್ ಆಂಟನಿ ಹಾಪ್ಕಿನ್ಸ್ ಅವರ ಜನ್ಮಸ್ಥಳ. ಅವರು ಮಾರ್ಗಮ್ ಜಿಲ್ಲೆಯಲ್ಲಿ ಜನಿಸಿ, 15ನೇ ವಯಸ್ಸಿನಲ್ಲಿ ಭೇಟಿಯಾದ ರಿಚರ್ಡ್ ಬರ್ಟನ್ ಅವರಿಂದ ಪ್ರೇರಿತರಾದರು. ಸೈಲೆನ್ಸ್ ಆಫ್ ದ ಲ್ಯಾಂಬ್ಸ್, ದಿ ಮಾಸ್ಕ್ ಆಫ್ ಝೊರೊ, ಹಿಚ್ಕಾಕ್, ಕಿಂಗ್ ಲಿಯರ್, ದಿ ಟು ಪೋಪ್ಸ್, ದಿ ಫಾದರ್—ಅವರ ಅಭಿನಯಗಳು ನನ್ನನ್ನು ಮಂತ್ರಮುಗ್ಧಗೊಳಿಸಿವೆ. ಇತ್ತೀಚೆಗೆ, ಡಾ. ಶ್ರೀವತ್ಸ ದೇಸಾಯಿ ಅವರೊಂದಿಗೆ ಮಾತನಾಡುವಾಗ, ನಾನು “ಪ್ಯಾಷನ್ ಆಫ್ ಪೋರ್ಟ್ ಟಾಲ್ಬಾಟ್ ಬಗ್ಗೆ ತಿಳಿದುಕೊಂಡೆ—2011ರಲ್ಲಿ ಗುಡ್ ಫ್ರೈಡೇಯಿಂದ ಈಸ್ಟರ್ ಸಂಡೇವರೆಗೆ ನಡೆದ ನಾಟಕೀಯ ಪ್ರದರ್ಶನ. ಈ ನಾಟಕವು ಕ್ರಿಸ್ತನ ‘ಪುನರುತ್ಥಾನ’ದಲ್ಲಿ ಅಂತ್ಯಗೊಂಡಿತು, ಪ್ರಸಿದ್ಧ ಪ್ಯಾಷನ್ ಪ್ಲೇ ಪರಂಪರೆಯಿಂದ ಸ್ಪಷ್ಟವಾಗಿ ಪ್ರೇರಿತವಾಗಿತ್ತು. ಈ ಪರಂಪರೆ 1633ರಲ್ಲಿ ಜರ್ಮನ್ ಪಟ್ಟಣದಲ್ಲಿ ಆರಂಭವಾಗಿ, ಪ್ರತೀ ಹತ್ತು ವರ್ಷಗಳಿಗೊಮ್ಮೆ ನಡೆಯುತ್ತಿದ್ದು, ಶತಮಾನಗಳಿಂದ ಮುಂದುವರಿದಿದೆ ಮತ್ತು ಜಗತ್ತಿನ ಅತ್ಯಂತ ಪ್ರಸಿದ್ಧ ಪ್ಯಾಷನ್ ಪ್ಲೇಗಳಲ್ಲಿ ಒಂದಾಗಿದೆ. ಪೋರ್ಟ್ ಟಾಲ್ಬಾಟ್ ಪ್ರದರ್ಶನದಲ್ಲಿ ಪ್ರಸಿದ್ಧ ನಟ ಮೈಕೆಲ್ ಶೀನ್ ಅಭಿನಯಿಸಿದರು, ಅವರು ಈ ಪ್ರದೇಶದಲ್ಲೇ ಬೆಳೆದವರು. ಪಟ್ಟಣದ ಜನರು ಕಲಾವಿದರು, ಸಿಬ್ಬಂದಿ ಮತ್ತು ನಾಯಕರು—1,000ಕ್ಕೂ ಹೆಚ್ಚು ಜನರು ಈ ಕೃತಿಯ ಸೃಷ್ಟಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ಪೋರ್ಟ್ ಟಾಲ್ಬೋಟ್ ನ ಮತ್ತೊಂದು ಖ್ಯಾತಿ- 2018ರಲ್ಲಿ ಪೋರ್ಟ್ ಟಾಲ್ಬಾಟ್ನ ಒಂದು ಗ್ಯಾರೇಜ್ನಲ್ಲಿ ಕಾಣಿಸಿಕೊಂಡ ಬ್ಯಾಂಕ್ಸಿ ಕಲಾಕೃತಿ ‘ಸೀಸನ್ಸ್ ಗ್ರೀಟಿಂಗ್ಸ್’! ಸುಮಾರು 20,000 ಮಂದಿ ಈ ಕಲಾಕೃತಿಯನ್ನು ನೋಡಲು ಬಂದಿದ್ದರು. ಬ್ಯಾಂಕ್ಸಿ ಭೇಟಿ ನಂತರ ಪೋರ್ಟ್ ಟಾಲ್ಬಾಟ್ನಲ್ಲಿ ಬೀದಿ ಕಲೆಯ ಗ್ರಫಿಟಿ ಸಂಗ್ರಹ ಹೆಚ್ಚುತ್ತಿದೆ ಮತ್ತು ಕಲಾವಿದರು ಸ್ವತಂತ್ರವಾಗಿ ಚಿತ್ರಿಸಲು ಮುಕ್ತ ಗೋಡೆಯೂ ಇದೆ. ಬ್ಯಾಂಕ್ಸಿ ಅವರ ಕಲೆಯಲ್ಲಿ, ಹಿಮದ ಹನಿಗಳನ್ನು ನಾಲಿಗೆಯ ಮೇಲೆ ಹಿಡಿಯುತ್ತಿರುವ ಮಗುವಿನ ಚಿತ್ರವಿತ್ತು, ಆದರೆ ಕೆಲವರ ಅಭಿಪ್ರಾಯದಂತೆ ಅದು ಸುಟ್ಟ ತೊಟ್ಟಿಯಿಂದ ಏರುತ್ತಿರುವ ಬೂದಿಯೆಂದು ಬಹಿರಂಗವಾಯಿತು. ಇದರ ಸಂಕೇತವನ್ನು ಪಟ್ಟಣದ ನಿವಾಸಿಗಳು ವಿಭಿನ್ನವಾಗಿ ಅರ್ಥೈಸಿದ್ದಾರೆ—ಕೆಲವರು ಇದನ್ನು ಪೋರ್ಟ್ ಟಾಲ್ಬಾಟ್ನ ಮಾಲಿನ್ಯದ ಮೇಲೆ ಟೀಕೆ ಎಂದು ನೋಡುತ್ತಾರೆ, ಇನ್ನು ಕೆಲವರು ಇದನ್ನು ಉಕ್ಕಿನ ಕಾರ್ಖಾನೆಯೊಂದಿಗೆ ಪಟ್ಟಣದ ಸಂಬಂಧದ ಸಿಹಿಕಹಿ ರೂಪಕವೆಂದು ಪರಿಗಣಿಸುತ್ತಾರೆ.
ಒಮ್ಮೆ ಗಣಿಗಾರಿಕೆಯ ಕೇಂದ್ರವಾಗಿದ್ದ ಮತ್ತು ಈಗ ಕೈಗಾರಿಕಾ ಪಟ್ಟಣವಾಗಿರುವ ಪೋರ್ಟ್ ಟಾಲ್ಬಾಟ್ನಿಂದ ನಿರಂತರ ಪ್ರತಿಭೆಗಳು ಹೊರಬಂದಿವೆ.
—ಶಾಲಿನಿ ಜ್ಞಾನಸುಬ್ರಹ್ಮಣಿಯನ್
ರಿಚರ್ಡ್ ಬರ್ಟನ್ ಟ್ರೈಲ್(trail) —ಫೋಟೋ: ಶಾಲಿನಿ ಜ್ಞಾನಸುಬ್ರಹ್ಮಣಿಯನ್
ಶ್ರೀವತ್ಸ ದೇಸಾಯಿ ತಮ್ಮ ವೇಲ್ಸ್ ನೆನಪುಗಳನ್ನು ಜೋಡಿಸುತ್ತಾರೆ. ನಾನು ಈ ದೇಶದ ಮಣ್ಣಿನ ಮೇಲೆ ಕಾಲಿಟ್ಟದ್ದು 1974 ರಲ್ಲಿ ಆಗಸ್ಟ್ ತಿಂಗಳ ಮೊದಲ ವಾರ. ಮಾಡ್ ಕವಿಡ್ ಆಕಾಶ ಜಿಟಿ ಜಿಟಿ ಮಳೆ. ಧಾರವಾಡದ ಶ್ರಾವಣವನ್ನು ನೆನೆಯುತಿತ್ತು ಮನ. ಎಲ್ಲೆಡೆ ಹಸಿರು ಹುಲ್ಲು. ನಾನು ಮೊದಲು ಕಂಡ ನ್ಯೂಪೋರ್ಟ್, ಕಾರ್ಡಿಫ್ ಗಳು ದಕ್ಷಿಣ ವೇಲ್ಸ್ ಪ್ರಾಂತದಲ್ಲಿವೆ. ನಾನು ಭೇಟಿಯಾದ ಎಳೆದೆಳೆದು ಇಂಗ್ಲಿಷ್ ಮಾತಾಡುವ ವೆಲ್ಶ್ ಜನರ ಮಾತಿನಲ್ಲಿlilt ಒಂದು ತರದ ಲಯ. ಅಂದು ಎಲ್ಲೆಡೆಗೆ eisteddfod (ಐಸ್ಟೆಡ್ವಡ್) ಎನ್ನುವ ವೆಲ್ಶ್ ರಾಷ್ಟ್ರೀಯ ಸಾಂಸ್ಕೃತಿಕ ಸಮ್ಮೇಳನದ ಪ್ರಚಾರ, ಉತ್ಸಾಹ. ಆ ಭಾಷೆಯನ್ನಾಡುವ ಸುಪ್ರಸಿದ್ಧ ಸಾಹಿತಿ, ಸಂಗೀತ, ಕಲಾಕಾರರ ಕೂಟ. ಸ್ಫರ್ಧೆಗಳು, ಕವನಗೋಷ್ಠಿ, ಇತ್ಯಾದಿ. ಹೆಮ್ಮೆಯ ಪುತ್ರ ರಿಚರ್ಡ್ ಬರ್ಟನ್ ಸಹ ಹುಡುಗರ ಸೊಪ್ರಾನೊ ಹಾಡುಗಾರಿಕೆಯಲ್ಲಿ ಗೆದ್ದಿದ್ದ. ಆತನ ದನಿ ಸುಪ್ರಸಿದ್ಧ.ಇಂದಿಗೂ ಸಹ ವೇಲ್ಸ್ನಲ್ಲಿ ಹುಟ್ಟಿದ ಶ್ರೇಷ್ಠ ಕವಿ ಡಿಲನ್ ಥಾಮಸ್ಸನ ರೇಡಿಯೋ ನಾಟಕ 'ಅಂಡರ್ ಮಿಲ್ಕ್ ವುಡ್ 'ನ ಆತನ ವಾಚನವನ್ನು Voice of Wales: mellifluous, baritone, ಎಂದು ಕರೆದು ಪದೇ ಪದೇ ಕೇಳಲಾಗುತ್ತದೆ, ಬಿತ್ತರಿಸಲಾಗುತ್ತದೆ. (ಮೇಲಿನ ಚಿತ್ರ ನೋಡಿರಿ.) ನಾನು ಕಾಲೇಜಿನಲ್ಲಿದ್ದಾಗ ರಿಚರ್ಡ್ ಬರ್ಟನ್ ಮತ್ತು ಎಲಿಝಬೆತ್ ಟೇಲರ್ ಯಾವಾಗಲೂ ಸುದ್ದಿಮಾಡುತ್ತಿದ್ದರು; ಅವರ ಸಿನಿಮಾಗಳು ಅಥವಾ ವೈಯಕ್ತಿಕ ವಿಷಯಗಳು ಯಾವಾಗಲೂ ಹಾಲಿವುಡ್ ಮಸಾಲೆಯನ್ನು ಹಂಡೆ ಗಟ್ಟಲೆ ನೀಡುತ್ತಿದ್ದವು. ಆಕೆಯ 7 ಗಂಡಂದಿರು, ಈತನಿಗೆ ಮೂವರು ಹೆಂಡತಿಯರು ಇತ್ಯಾದಿ. ಮೊದಲ ಸಲ ಇವರಿಬ್ಬರು ಮದುವೆಯಾದಾಗ ಆಕೆಯ ಐದನೆಯವನು, ಈತನ ಎರಡನೆಯವಳು ಇತ್ಯಾದಿ. ಡಿವೋರ್ಸ್ ಮಾಡಿದ ಒಂದು ವರ್ಷದಲ್ಲಿ ಮರುಮದುವೆ, ಇತ್ಯಾದಿ. ಕ್ಲಿಯೋಪಾತ್ರಾ ಸಿನಿಮಾ ಅಲ್ಲಿಯವರೆಗಿನ ಅತ್ಯಂತ ಅಧಿಕ ವೆಚ್ಚದ ಯೋಜನೆಯಾಗಿತ್ತು. ರಿಚರ್ಡ್ಗೆ ಅದರಲ್ಲಿ ಮಾರ್ಕ್ ಆಂಥನಿ ಪಾತ್ರ. ಸತ್ಯವೋ ಮಿಥ್ಯವೋ ರಾಣಿ ಕ್ಲಿಯೋಗೆ ಕತ್ತೆಯ ಹಾಲಿನಲ್ಲಿ ಸ್ನಾನ ಮಾಡುವ ರೂಢಿ ಇತ್ತಂತೆ. ಅದು ಚರ್ಮಕ್ಕೆ ಪೋಷಕ ಎಂದು ಆಕೆಯ ನಂಬಿಕೆ. ಆ ದೃಶ್ಯದ ಚಿತ್ರಣಕ್ಕೆ ಸ್ನಾನದ ಟಬ್ ತುಂಬಲು ನೂರಾರು ಹಾಲು ಕೊಡುವ ಗಾರ್ಧಭಗಳನ್ನು ರೋಮ್ ನಗರದಲ್ಲಿ ಎಲ್ಲಿಂದ ಹಿಡಿದು ತರುವುದು? ಕೊನೆಗೆ ಕೃತಕ ಹಾಲನ್ನು ಉಪಯೋಗಿಸಲಾಯಿತು. ಕೆಲವಷ್ಟೇ ಸಿನಿಮಾ ಸಿಬ್ಬಂದಿಗಷ್ಟೇ ಶೂಟಿಂಗ್ ಸಮಯದಲ್ಲಿ ಪ್ರವೇಶ, ಒಬ್ಬ ಕುರುಡ ಕವಿ ಪಾತ್ರಧಾರಿಯನ್ನು ಹೊರತಾಗಿ. ಆಮೇಲೆ ಗೊತ್ತಾದುದು ಆತನ ಪಾತ್ರವಷ್ಟೇ ಕುರುಡು, ನಿಜವಾಗಿಯೂ ಅಲ್ಲ ಅಂತ! ನಾನು ನಾಲ್ಕು ವರ್ಷಗಳನ್ನು ದಕ್ಷಿಣ ವೇಲ್ಸ್ ನಲ್ಲಿ ಕಳೆದಿದ್ದೇನೆ. ಅವರಿಗೆ ತಮ್ಮ ಭಾಷೆಯಲ್ಲದೆ ಮೂರು ವಿಷಯಗಳು ಅತಿಪ್ರಿಯವಾದವು - ರಗ್ಬಿ ಆಟ, ದಿನದ ದುಡಿತವಾದ ಮೇಲೆ ಪಬ್ ನಲ್ಲಿ ಭೇಟಿಯಾಗುವದು. ಅದಕ್ಕೆ ಅವರಲ್ಲಿ ಒಂದು ನಾಣ್ನುಡಿ ಇದೆ: ವಲಸೆ ಹೋದರೂನು ಮೂವರು ವೆಲ್ಷ್ ಜನ ಕೂಡಿದರೆ ಸಾಕು ಅಲ್ಲೇ ಮೂರನ್ನು ಸ್ಥಾಪಿಸಿಬಿಡುತ್ತಾರಂತೆ: ರಗ್ಬಿ ಕ್ಲಬ್ಬು, ಪಬ್ಬು ಮತ್ತು ಒಂದು ಐಸ್ಟೆಡ್ವಡ್! ಇವೆಲ್ಲವೂ ಚಿರಾಯುವಾಗಿರಲಿ!
ಶ್ರೀವತ್ಸ ದೇಸಾಯಿ
ಎರಡು ಕವಿತೆಗಳು -- ಡಾ ರಾಜಶ್ರೀ ಪಾಟೀಲ
1. ಮಿತಿಯ ಪರಿಮಿತಿ
ತಿಳಿದಿತ್ತು ಹರಿವ ನದಿ, ಸಾಗರ ಸೇರುವದೇ ಗುರಿಯೆಂದು, ಅದಕೇನು ಗೊತ್ತಿತ್ತು ಸಾಗರದಲೆ ಸೇರುವದರೊಟ್ಟಿಗೆ, ಅದಕುಂಟು ಮೇಘ ಕಟ್ಟುವ, ಮಳೆ ಸುರಿಸುವ ಸಾಮರ್ಥ್ಯ ಕಣ್ಮುಚ್ಚಿ ಕಾಣುವ ಕನಸುಗಳ ನನಸಾಗಿಸುವ, ಕೈಗೆಟುವ ಕಾರ್ಯಗಳ ಪೂರೈಸುವ ಭರದಲ್ಲಿ ಅರಿವಾರಿಗುಂಟು ಪ್ರತಿ ಜೀವದ ಸಾಮರ್ಥ್ಯದ ಮಿತಿಯೆಲ್ಲಿ ?
ರಾಜಶ್ರೀ ಪಾಟೀಲ
ಚಿತ್ರ: AI ಕೃಪೆ
2. ಅರಿವಿನ ಪರದೆ
ಅಲಂಕಾರಕ್ಕೆ ಅಟ್ಟಣಿಗೆಯಲ್ಲಿ ಅಂದ ತೋರಿಸೋ ಹಿತ್ತಾಳೆ ಚರಿಗೆ, ದೇವರ ಕೋಣೆಯಲ್ಲಿ ದರ್ಬಾರು ನಡೆಸೋ ತಾಮ್ರದ ಚರಿಗೆ, ಬಯಲಿನ ಬಿಸಿಲುರಿಯ ದಾಹ ನೀಗುವ ಅಡುಗೆ ಮನೆಯ ಸ್ಟೀಲಿನ ಚರಿಗೆ , ಬೆಳ್ಳಂಬೆಳಗ್ಗೆ ತಪ್ಪದೆ ಹಿತ್ತಲ ಪ್ರವಾಸಕ್ಕೆ ಉಪಯೋಗಿಸೋ ಪ್ಲಾಸ್ಟಿಕ್ ಚರಿಗೆ , ಮರೆಯದೆ ಪ್ರತಿ ಅಮವಾಸೆ, ಹುಣ್ಣಿಮೆಗೆ ಬಯಲಿನ ಜೀವಜಂತುಗಳಿಗೆ ಅವ್ವ ಕಳಿಸುವ ಚರಗದ ಮಣ್ಣಿನ ಚರಿಗೆ , ಬಣ್ಣ ತರಾವರಿ, ಆಕಾರ ತರಾವರಿ, ಮೈಮಾಟ ತರಾವರಿ ಆದರೆ ಪರಿ ಪರಿಯಾಗಿ ತುಂಬಿ ನೀಡುವದಲ್ಲವೇ ಗುರಿ ?