ಹೀಗೊಂದು ಹರಟೆ

ನಮಸ್ಕಾರ ಅನಿವಾಸಿ ಬಳಗಕ್ಕೆ. 
ಮೇ ಮಾಸ( ತಿಂಗಳಿನ) ದಲ್ಲಿ ಕವೀಂದ್ರ ರವೀಂದ್ರರ ಜನುಮದಿನದ ಸಂಭ್ರಮಾಚರಣೆಯ ಜೊತೆಗೇ ಭಾರತದಲ್ಲಿ 'ತಾಯಂದಿರ ದಿನ' ದ ಸಡಗರವೂ. ಈ ಬಳಗದೆಲ್ಲ ತಾಯಂದಿರಿಗೂ, ತಾಯಂಥಕರಣದ ಎಲ್ಲ ಸಹೃದಯರಿಗೂ ಶುಭಾಶಯಗಳು. ಸುಜಲಾಂ ಸುಫಲಾಂ ವಂದೇ ಮಾತರಂ ಎಂದು ತಾಯ್ನಾಡಿಗೆ ವಂದಿಸುತ್ತ ' ಜಡೆಯಾಚೆ ಮೊಗದಿರುಹಿಯೂ' ಜಗವನ್ನೆಲ್ಲ ಪೊರೆಯುತ್ತಿರುವ ಜಗನ್ಮಾತೆಗೆ ಮಣಿಯುತ್ತ ನನ್ನದೊಂದು ಹಳೆಯ ಬರಹವನ್ನು ಹಂಚಿಕೊಳ್ಳುತ್ತಿರುವೆ..

~ ಸಂಪಾದಕಿ.

ಹೆರಳು – ಮಾರಿ. 

ಏನಪಾ ಇದು ಅಂತ ನೀವು ತಲಿ ತುರಸಕೊಳ್ಳೂದರಾಗೇ  ನಾನೇ ಹೇಳಿಬಿಡತೀನಿ. ನಮ್ಮ ಉತ್ತರ ಕರ್ನಾಟಕದ ಮಂದಿಗೆ ಈ ಪದ ಚಿರಪರಿಚಿತ. ಇನ್ನ ಉಳದವರಿಗೆ ಹೆರಳು ಗೊತ್ತಿರತದ. ಮಾರಿ ತಿಳೀಲಿಕ್ಕಿಲ್ಲ. ಆದ್ರೂ ಇಲ್ಲಿನ ಸದಸ್ಯರೆಲ್ಲ ಬೇಂದ್ರೆ ಅಜ್ಜನ ‘ ಮುಗಿಲ ಮಾರಿಗೆ ರಾಗರತಿಯ’ ಕೇಳೇ ಇರತೀರಿ. ಹೂಂ.. ನಾನೂ ಅದೇ ಮಾರಿ ಅಂದ್ರ ಮುಖದ ಬಗ್ಗೆನೇ ಹೇಳುತ್ತಿರುವುದು.  

ಈ ‘ ಹೆರಳು – ಮಾರಿ’ ದು ಒಂದು ದೊಡ್ಡ ಸುದ್ದಿ. ಮುಂಜಾನಿ ಆಗತಿದ್ದ ಹಂಗೇ “ ಕ್ಯಾಮಾರಿ ಮಾಡಕೊಂಡು ಕೂಡಬ್ಯಾಡ್ರಿ. ಲಗೂ ಲಗೂ ಹೆರಳು-ಮಾರಿ ಮಾಡಕೋರಿ” ಅನ್ನಾಕಿ ನಮ್ಮಾಯಿ. ಮಧ್ಯಾಹ್ನ 4 ಆಯಿತಿಲ್ಲೋ “ ಮೂರುಸಂಜಿ ಆಗಲಿಕ್ಕೆ ಬಂತು, ಎದ್ದು ಹೆರಳು-ಮಾರಿ ಮಾಡಕೋರಿನ್ನ” ಅನ್ನಾಕಿ. ಹೀಂಗs ಮುಂಜಾನೆದ್ರ ಹೆರಳು-ಮಾರಿ, ಸಂಜಿ ಆದ್ರ ಹೆರಳು-ಮಾರಿ, ಹೊರಗ ಹೊಂಟ್ರ ಹೆರಳು-ಮಾರಿ, ಯಾರರೇ ಮನಿಗೆ ಬರತಾರಂದ್ರ ಹೆರಳು-ಮಾರಿ.. ಹೆರಳು-ಮಾರಿ ಸಂಭ್ರಮವೇ ಸಂಭ್ರಮ.

ಸಣ್ಣವರಿದ್ದಾಗ ಅಮ್ಮನೋ, ಮಾಮಿಯೋ, ಮಾಂಶಿಯೋ ಯಾರೋ ಒಬ್ಬರು ಜಿಪುಣತನ ಮಾಡದೇ ಛಂದಾಗಿ ಖೊಬ್ರಿ ಎಣ್ಣಿ ಹಚ್ಚಿ, ಹಣಗೀಲೇ ತೀಡಿ ತೀಡಿ ಹಿಕ್ಕಿ ಬಿಗತಾನ ಬಿಗದು ಎರಡು ಹೆರಳು ಹಾಕಿ ರಿಬ್ಬನ್ನು ಕಟ್ಟಿದರಂದ್ರ ಎಂಥ ಗಾಳಿಗೂ ಆ ಕೂದಲನ್ನ ಹಾರಾಡಿಸೋ ಶಕ್ತಿ ಇರತಿರಲಿಲ್ಲ. ಮುಂಗುರುಳು- ಪಿಂಗುರುಳು, ಪುಡಿಗೂದಲು ಎಲ್ಲ ಮಾಯ ಆಗಿಬಿಟ್ಟಿರತಿದ್ವು. ಎಷ್ಟೋ ಸಲ ಕುತಿಗಿ ಸೈತ ಅಲ್ಲಾಡಿಸಲಿಕ್ಕೆ ಬರತಿರಲಿಲ್ಲ. ಹಿಂತಲೆಯ ಕೂದಲು ಜಗ್ಗಿ ಗುಳ್ಳೆಗಳೆದ್ದು ಬಿಡಬೇಕು ಹಂಗ ಹೆರಳು ಹಾಕಿರತಿದ್ರು. “ ಮ್ಯಾಲ ಕಟ್ಟಬ್ಯಾಡ, ಕೆಳಗೇ ಬಿಡು, ರಿಬ್ಬನ್ ನಾಗ 4 ಅಲ್ಲ 6 ಹೂವು ಮಾಡು, ಅಷ್ಟ ಬಿಗಿ ಬ್ಯಾಡ ಸ್ವಲ್ಪ ಸಡಿಲ ಹಾಕು” ಅಂತೆಲ್ಲ ನಾವು ಏನು ಹೇಳಿದರೂ ‘ಹಾಂ ಹೂಂ’ ಸಹಿತ ಅನ್ನದೇ ತಮ್ಮದೇ ಮನಮಾನಿ ಮಾಡತಿದ್ರು. “ ನಿಮಗೇನ ತಿಳೀತದ? ನೀವು ಹೇಳಿದ್ಹಾಂಗ ಮಾಡಿದ್ರ ಮುಗೀತು. ತಲ್ಯಾಗ ಎರಡು ಕೂದಲ ಉಳ್ಯಂಗಿಲ್ಲ ಆಮ್ಯಾಲೆ” ಅಂತ ಹೆದರಸತಿದ್ರು. ಬಾಬ್ ಕಟ್, ಪೋನಿ ಟೇಲ್, ಸ್ಟೆಪ್ ಕಟ್ ಗಳಾಗಲಿ, ಶಾಂಪೂ ಮಾಡಿಕೊಂಡು ಸಿಲ್ಕಿ ಸಿಲ್ಕಿ ಕೂದಲಾ ಹಾರಾಡಿಸೂದಾಗಲಿ, ಬೆನ್ನಹಿಂದ ಕೂದಲ ಹರವಿಕೊಂಡು ಅಡ್ಡಾಡೂದಾಗಲಿ, ಮುಂಗುರುಳು ತೀಡಿಕೊಳ್ಳೂದಾಗಲಿ ಬಿಲ್ಕುಲ್ ಮಾಡೂಹಂಗಿರಲಿಲ್ರೀ.
ಒಮ್ಮೆ ಯಾರೋ ತಿರುಪತಿಗೆ ಹೋಗಿದ್ವಿ ಅಂತ ಪ್ರಸಾದದ ಲಾಡು ಕೊಡ್ಲಿಕ್ಕೆ ಬಂದಿದ್ದರು. ಅವರು ಹಂಗs ಮಾತಾಡಕೋತ ಅವರ ಮನೆಯಾಗ ತಿರುಪತಿಗೆ ಹೋದರೆ ಹೆಣ್ಣು ಮಕ್ಕಳು ಗಂಡಸರು ಅನ್ನಲಾರದೆ ಎಲ್ಲಾರು ಮುಡಿ ಒಪ್ಪಿಸೋ ಪದ್ಧತಿ ಅದ ತಮ್ಮ ಮನ್ಯಾಗ ಅಂತ ಹೇಳುತ್ತಿದ್ದರು. ಅವರು ಹೋದಮೇಲೆ ಹೈಸ್ಕೂಲಿನಲ್ಲಿ ಕಲಿಯುತ್ತಿದ್ದ ನನ್ನ ಮಗ “ ನೀನೋ! ನಿನ್ನ ವೆಂಕಪ್ಪನೋ!” ಎಂದು ನಗೆಯಾಡಿ “ ಏನೇ ಅನ್ನು ಅವನ ಲಡ್ಡು ಮಾತ್ರ ಮಸ್ತ ಇರ್ತಾವ” ಅಂತ ನನಗೆ ಅಣಕಿಸಿ ಉಂಡಿ ಮೆದ್ದು ಎದ್ದು ಹೋದ. ಆಮೇಲೆ ‘ಓ ಮೈ ಗಾಡ್’ ಸಿನಿಮಾದಾಗ ಇದೇ ಮುಡಿ ಕೊಡುವ ಪದ್ಧತಿಯ ಬಗ್ಗೆ ಪರೇಶ್ ರಾವಲ್ ‘ಮುಂಜಾನೆದ್ದು ಬಾಗಲ ತೆಗೆದು ಕೂಡಲೇ ರಾಶಿ ರಾಶಿ ಕೂದಲು ನಿಮ್ಮ ಮನೆ ಮುಂದೆ ಹರಡಿದ್ದರೆ ನಿಮಗೆ ಖುಷಿ ಅನಿಸುವುದೇ’ ಎಂಬರ್ಥ ಬರುವ ಮಾತಿನ ಮೂಲಕ ವ್ಯಂಗ್ಯವಾಡುವ ಸೀನ್ ಅದ. ಆಗಾಗ ಹೌದು, ಯಾಕಿರಬಹುದು ಇಂಥ ಪದ್ಧತಿ ಅಂತ ಯೋಚಿಸಿದಾಗಲೆಲ್ಲ ಅನ್ನಿಸುವುದಿಷ್ಟೇ. ಮನುಷ್ಯ ಅಥವಾ ಭಕ್ತ ಅಲ್ಲಿ ಮುಡಿ ಕೊಡುತ್ತಿರುವುದು ಬರಿ ತನ್ನ ಕೂದಲಿನ ರಾಶಿಯನ್ನಲ್ಲ, ತನ್ನ ರೂಪವನ್ನು.. ಸೌಂದರ್ಯವನ್ನು. ಒಂದರ್ಥದಾಗ ತನ್ನತನವನ್ನು, ತನ್ನ ಅಸ್ತಿತ್ವವನ್ನು ಅಂತ. ನೋಡಿ ಕೂದಲು ದೇಹದ ನಿರ್ಜೀವವಾದ ಒಂದು ಭಾಗ. ಆದರೆ ಅದು ನಮಗೆ ಕೊಡುವ ಖುಷಿ, ಆತ್ಮವಿಶ್ವಾಸ, ಹೆಮ್ಮೆಗಳು ಅಷ್ಟಿಷ್ಟಲ್ಲ. ಕನ್ನಡಿ ಮುಂದೆ ನಿಂತು ಕೂದಲು ತೀಡದ, ಮುಂಗುರುಳನ್ನು ಬೆರಳಲ್ಲಿ ಸುತ್ತದ ಒಂದೇ ಒಂದು ಮಾನವ ಜೀವಿಯನ್ನು ತೋರಿಸಿ ಬಿಡಿ ಸಾಕು. ಹುಡುಗಿಯರಿಗಂತೂ ಅವರ ಜಡೆ, ಕೂದಲು ಸರ್ವಸ್ವ. ಹಂಗಂತ ಹುಡುಗರೇನೂ ಕಮ್ಮಿ? ದಿನಕ್ಕ ನೂರು ಸಲ ಹೋಗುತ್ತಾ ಬರುತ್ತಾ ಕನ್ನಡಿ ಮುಂದೆ ನಿಂದ್ರೋದೇನು? ಒಮ್ಮೆ ಕೈಯಿಂದ, ಒಮ್ಮೆ ಬ್ರಷ್ ನಿಂದ, ಒಮ್ಮೆ ಪಾಕೆಟ್ ನ ಪುಟ್ಟ ಬಾಚಣಿಕೆಯಿಂದ ಕ್ರಾಪ್ ತೀಡಿದ್ದೇ ತೀಡಿದ್ದು. ಹಿಂಗ ಕೂದಲು ಸೌಂದರ್ಯದ ಪ್ರತೀಕ. ಅದನ್ನೇ ತೆಗೆದು ದೇವನಡಿ ಇಡುವುದು ನಾವು ನೀವು ಚ್ಯಾಷ್ಟಿ ಮಾಡಿ ನಕ್ಕಷ್ಟು ಸುಲಭದ ಕೆಲಸ ಏನಲ್ಲ.

ಈ ಕೂದಲಿನ ರಗಳೆ ಇರಲಿಲ್ಲ ಅಂದರೆ 108 ತರದ ಹೇರ್ ಆಯಿಲ್ ಗಳು, ಸಾವಿರಾರು ತರದ ಶಾಂಪೂ, ಕಂಡಿಷನರ್, ಹೇರ್ ಜೆಲ್,ಹೇರ್ ಕ್ರೀಮ್, ಹೇರ್ ಡೈಗಳು ಇತ್ಯಾದಿಗಳನ್ನೆಲ್ಲ ಉತ್ಪಾದಿಸುವ ಕಾರ್ಖಾನೆಗಳು, ಅವುಗಳ ಮೂಲಕ ಅನ್ನ ಸಂಪಾದಿಸುವ ಲಕ್ಷಾಂತರ ಕುಟುಂಬಗಳ ಗತಿ ಏನಾಗುತ್ತಿತ್ತು? ಸಲೂನ್ ಗಳು, ಹೇರ್ ಹೆಡ್ ಮಸಾಜ್ ಸೆಂಟರ್ ಗಳು, ಹೇರ್ ಸ್ಪಾ, ಬ್ಯೂಟಿ ಪಾರ್ಲರ್ ಗಳು ಇವುಗಳೆಲ್ಲ ಬಾಗಿಲು ಬಂದ್ ಮಾಡಿಕೊಂಡು ಹೋಗಬೇಕಾಗುತ್ತಿತ್ತು. ನಾನಾ ತರದ ಹೂವುಗಳು, ಕಸ್ತೂರಿದವನಗಳು, ಕ್ಯಾದಿಗೆಗಳು, ಆಭರಣಗಳು, ನೂರಾರು ತರದ ಫ್ಯಾಶನೇಬಲ್ hair accessories, ಕ್ಲಿಪ್ಸ್, ರಬ್ಬರ್ ಬ್ಯಾಂಡ್, ಹೇರ್ ಪಿನ್ ಕೇಳುವವರಿಲ್ಲದೆ ಅನಾಥವಾಗುತ್ತಿದ್ದವು. ಕವಿಗಳಿಗೆ ಬರೆಯಲು ಮುಖ್ಯವಾದ ಒಂದು ವಿಷಯ ಕಮ್ಮಿಯಾಗುತ್ತಿತ್ತು. ನಲ್ಲ ಬಂದು ಹೂ ಮುಡಿಸಿ ನಲ್ಲೆಗೆ ಪ್ರೇಮ ನಿವೇದನೆ ಮಾಡಿಕೊಳ್ಳಲಾಗುತ್ತಿರಲಿಲ್ಲ. ಮೊಗ್ಗಿನ ಜಡೆ ಹೆಣೆಯುವವರ, ದಂಡೆ ಮಾಲೆ ಕಟ್ಟುವವರ ಕಸುಬಿಗೆ ಕಲ್ಲು ಬೀಳುತ್ತಿತ್ತು.
ಎಲ್ಲೆರೇ ಊಟ ತಿನಿಸಿನಲ್ಲಿ ಒಂದೆಳೆ ಕೂದಲು ಕಂಡರೆ ಕಸಿವಿಸಿ ಪಡ್ತೀವಿ. ಆದರೆ ಕೂದಲವಿಲ್ಲದ ಜೀವನ ಊಹಿಸಿಕೊಳ್ಳುವುದು ಕಷ್ಟ. ಈ ಕೇಶದ ಮಹಿಮೆ, ಸಾಮರ್ಥ್ಯ ಅಗಾಧವಾದದ್ದು. ಪುರಾಣ, ಇತಿಹಾಸಗಳು ಇದಕ್ಕೆ ಸಾಕ್ಷಿಯಾಗಿವೆ. ಸುರಗಂಗೆ ಭೂಲೋಕಕ್ಕೆ ಅವತರಿಸಬೇಕಾದರೆ ಶಿವನ ಜಡೆಯೇ ಬೇಕಾಯಿತು. ರಭಸದಿಂದ ಧಮ್ಮಿಕ್ಕುವ ಅವಳನ್ನು ತಡೆಯಲು ಶಿವನ ಜಡೆ ಇರದಿದ್ದರೆ ಆ ಮಂದಾಕಿನಿಯ ರಭಸದ ಸೊಕ್ಕಿಗೆ ಜಗತ್ತೇ ದಿಕ್ಕೇಡಿಯಾಗುತ್ತಿತ್ತೇನೋ? ಪಕ್ಷಕ್ಕೊಮ್ಮೆ ಬಿಳಿ ಪತ್ತಲ ನೇಯುವ ಹುಣ್ಣಿಮೆ ಹಸ್ತದ ಚಂದ್ರನಿಗೂ ಆಶ್ರಯ ಈ ಜಡೆಯೇ. ನಮ್ಮ ನಾಡಿನ ಅನೇಕ ಮನೆತನಗಳ ಕುಲದೈವವಾದ ವೀರಭದ್ರನೂ ಕೂಡ ಶಿವನ ಜಟೆಯಿಂದಲೇ ಹುಟ್ಟಿದವನೆಂಬ ಪ್ರತೀತಿ.

ಇನ್ನು ಮಹಾಭಾರತ ನಡೆದದ್ದೇ ದ್ರೌಪದಿಯ ಮುಡಿಯಿಂದ. ಅವಳು ಮುಡಿಬಿಚ್ಚಿದಾಗ ಭಾರತ ಆರಂಭವಾಯಿತು, ಕಟ್ಟಿದಾಗ ಮುಕ್ತಾಯವಾಯಿತೆಂಬ ಮಾತಿದೆ. ತನ್ನ ಕೂದಲಿಗೆ ಕೈ ಹಾಕಿ ಎಳೆದೊಯ್ದ ದುರುಳನ ಕರುಳ ಬಿಗಿದು ಅವನ ರಕ್ತದಿಂದ ಅದನ್ನುತೊಯ್ಯಿಸದೇ ತಾನು ಮುಡಿ ಕಟ್ಟಲಾರೆನೆಂಬ ದ್ರೌಪದಿಯ ಪ್ರತಿಜ್ಞೆಗೆ 18 ಅಕ್ಷೋಹಿಣಿ ಸೈನ್ಯದ ಭಾರತ ಯುದ್ಧವೇ ನಡೆಯಬೇಕಾಯಿತು. ಹೌದಲ್ಲವೇ? ದುಶ್ಯಾಸನ ಕೈ ಹಾಕಿದ್ದು ಬರೀ ಹೆಣ್ಣೋರ್ವಳ ತಲೆ ಕೂದಲಿಗೆ ಅಲ್ಲ, ಯುಗದ ಅಸ್ಮಿತೆಗೆ.. ಸ್ತ್ರೀತನದ ಗರಿಮೆಗೆ.. ಸಂಸ್ಕಾರ ಸಂಸ್ಕೃತಿಗಳ ಬುಡಕ್ಕೇ ಕೈ ಹಾಕಿದ್ದ. ಅದಕ್ಕೆಂದೇ ಅದಕ್ಕೆ ಸಾಕ್ಷಿಯಾದ, ನೇರವಾಗಿ ಪರೋಕ್ಷವಾಗಿ ಭಾಗಿಯಾದ ಎಲ್ಲರೂ ಅದಕ್ಕೆ ಬೆಲೆ ತೆರಲೇಬೇಕಾಯಿತು ಮಾಡಿದ್ದುಣ್ಣೋ ಮಹಾರಾಯ ಅನ್ನೋ ಹಂಗ.

ಧನನಂದನಿಂದ ಅಪಮಾನಕ್ಕೆ ಒಳಗಾದ ಆಚಾರ್ಯ ಚಾಣಕ್ಯನೂ ಸಹ ವೈರಿಯನ್ನು ಅಮೂಲಾಗ್ರವಾಗಿ ನಾಶ ಮಾಡದೆ ಶಿಖೆ ಕಟ್ಟಲಾರೆನೆಂದು ಪ್ರತಿಜ್ಞೆಗೈದು ಶಿಖೆಯ ಕೂದಲು ಬಿಟ್ಟದ್ದು. ಯಾವ ಅಸ್ತ್ರಗಳಿಗೂ ಇರದ ಮೊನಚನ್ನು ಅವನ ಶಿಖೆಯ ಕೇಶದಲ್ಲಿ ಕಂಡಿತು ಮನುಕುಲದ ಇತಿಹಾಸ. ಭಾರತದ ಇತಿಹಾಸಕ್ಕೆ ಚಂದ್ರಗುಪ್ತ ಮೌರ್ಯ, ಅಶೋಕರಂತಹ ಅರಸರ ಸುವರ್ಣ ಯುಗವನ್ನು ದಯಪಾಲಿಸಿದ್ದು ಇದೇ ಕೇಶ ಎಂದಾಯಿತಲ್ಲವೇ?

ಕೆಡುವ ಗಂಡರನ್ನು ತೊರೆದು ಚೆನ್ನಮಲ್ಲಿಕಾರ್ಜುನನತ್ತ ಮೊಗದಿರುಹಿ ಹೊರಟ ಅಕ್ಕಳನ್ನು ಸಂರಕ್ಷಿಸಿದ್ದೇ ಈ ಕೇಶ ರಾಶಿ. ಇನ್ನು ನಮ್ಮ ಸಾಹಿತ್ಯದಲ್ಲಿ ಈ ಜಡೆಯ, ಕೇಶರಾಶಿಯ, ಮುಂಗುರುಳಿನ ವರ್ಣನೆಗಳು ಹೇರಳವಾಗಿ ದೊರೆಯುತ್ತವೆ. ನೀಲವೇಣಿ, ನಾಗವೇಣಿ ಇತ್ಯಾದಿ ಹೆಸರುಗಳನ್ನು ಕೇಳಿದೊಡನೆ ತೊನೆದಾಡುವ ಜಡೆಗಳ ಚಿತ್ರ ಕಣ್ಮುಂದೆ ಬರುತ್ತದೆ. “ ಅವಳೊಮ್ಮೆ ಹರಳಕೆದರಿ ಕಪ್ಪು ಗುರುಳನ್ನು ಬೆನ್ನ ಮೇಲೆಲ್ಲ ಹರಡಿದರೆ ದೂರದಲ್ಲಿ ಗಿರಿಯ ಮೇಲೆ ಇಳಿದಂತೆ ಇರುಳ ಮಾಲೆ” ಎಂದು ಮನದನ್ನೆಯನ್ನು ವರ್ಣಿಸುವ ಕೆ ಎಸ್ ಎನ್ “ನಾಗರ ಕುಚ್ಚಿನ ನಿಡು ಜಡೆಯವಳು ಈಕೆಯು ಬಂದುದು ಎಲ್ಲಿಂದ” ಎಂದು ಅಚ್ಚರಿ ಪಡುತ್ತಾರೆ. “ ತಗ್ಗಿರುವ ಕೊರಳಿನ ಸುತ್ತ ಕರಿಮಣಿಯೊಂದೇ ಸಿಂಗಾರ ಕಾಣದ ಹೆರಳು “ ಎಂದು ಅಕ್ಕಿ ಆರಿಸುವಾಗ ಕವಿತೆಯಲ್ಲಿ ಬಣ್ಣಿಸುತ್ತಾರೆ.

ಮುಂಗುರುಳು ದುಂಬಿಗಳಂತೆ ಅಂತಲೂ, ಯೆ ಜುಲ್ಫೆಹೈ ಜೈಸೆ ಕಾಂಧೋ ಪೆ ಬಾದಲ್ ಗಿರೆ ಹುವೆ’ ಅಂತಲೂ, ಉಡೆ ಜಬ್ ಜಬ್ ಜುಲ್ಫೆ ತೇರಿ ಎಂದೂ, ಯೆ ಗೇಸುವೋಂಕಿ ಘನಿ ಛಾವ್ ಹೈ ಮೇರೆ ಖಾತಿರ್ ಅಂತಲೂ ನೂರಾರು ಸಿನೆಮಾ ಹಾಡುಗಳು ಈಗಲೂ ರಸಿಕರ ಹೃದಯಕ್ಕ ಲಗ್ಗೆ ಹಾಕತಾವ. ಸರ್ ಜೋ ತೇರಾ ಚಕರಾಯೆ ಯಾ ದಿಲ್ ಡೂಬಾ ಜಾಯೆ ಆಜಾ ಪ್ಯಾರೆ ಪಾಸ್ ಹಮಾರೆ ಕಾಹೆ ಘಬರಾಯೆ ಅಂತ ಚಂಪಿ ( ಮಸಾಜ್) ಮಾಡತಾ ಹಾಡು ಹೇಳೋ ಜಾನಿ ವಾಕರ್ ನನ್ನು ಮೆಚ್ಚದವರೇ ಇಲ್ಲ.

ಅಣ್ಣ-ತಮ್ಮ, ಅಕ್ಕ ತಂಗಿಯರ ಜಗಳಕ್ಕ ಈ ಕೂದಲ ಬೇಕೇ ಬೇಕು ಅವರ ಜುಟ್ಟು ಇವರ ಕೈಯಾಗ ಇವರ ಜುಟ್ಟು ಅವರ ಕೈಯಾಗ ಅಂದಾಗನೇ ಅದು ಖರೇ ಸೋದರ ಪ್ರೇಮ. ಕೈ ಕೈ ಜಗಳಕ್ಕಿಂತ ಕೂದಲ ಕೂದಲ ಜಗಳಾನೇ ಬಹಳ ಆಗ್ಯಾವರಿ ನಾವು ಸಣ್ಣವರಿದ್ದಾಗ. ಈಗಲೂ ಅಷ್ಟೇ ಬಹಳ ಸಿಟ್ಟು ಬಂತಂದ್ರ ಮೈ ಹರಕೊಂಡು ಕೂದಲ ಕಿತ್ತುಕೊಳ್ಳುವಷ್ಟs ಸಂತಾಪ ಆಗುತದ್ರೀ.

ಇನ್ನೊಂದ ವಿಷಯ.. ಈ ಕೂದಲಾನ್ನ ಕತ್ತರಿಸೂದು ಅಂದ್ರ ಹೇರ್ ಕಟ್ ಎಲ್ಲಾ ಯಾವಾಗ ಬೇಕಂದ್ರ ಆವಾಗ ಮಾಡೂ ಹಂಗಿರಲಿಲ್ರೀ. ಹುಣ್ಣಿಮೆ, ಅಮವಾಸಿ, ಏಕಾದಶಿ, ದ್ವಾದಶಿ, ವೆಂಕಪ್ಪನ ಒಕ್ಕಲದವರಿದ್ರ ಶನಿವಾರ ಹೀಂಗ ದಿನಾ ನೋಡಿ ಸಲೂನ್ ಗೆ ಹೋಗಬೇಕಾಗಿತ್ತು. ಹೆಣ್ಣು ಮಕ್ಕಳಂತೂ ಕೂದಲಿಗೆ ಕತ್ತರಿನೇ ಹಚ್ಚೂ ಹಂಗಿರಲಿಲ್ರೀ. ಗಂಡಸರೂ ಸಹ ಹಜಾಮತಿ ಮಾಡಿಸಿಕೊಂಡು ಬಂದಮ್ಯಾಲೆ ಹಾಕಿದ್ದ ಬಟ್ಟೆ ಎಲ್ಲ ತೊಯ್ಯಿಸಿಟ್ಟು ಕೈಯಾಗ ಒಂದ ಹನಿ ಖೊಬ್ರಿ ಎಣ್ಣಿ ಹಾಕಿಸಿಕೊಂಡು ತಲಿಗೆ ಹಚಗೊಂಡು ಎರಡು ತಂಬಿಗೆ ಯಾರದರೇ ಕಡೆ ನೀರು ಹಾಕಿಸಿಕೊಂಡ ಮ್ಯಾಲೆನೇ ಗಂಗಾಳು – ತಂಬಿಗಿ ಮುಟ್ಟೂದು. ನಮ್ಮ ಮಕ್ಕಳಿಗೆ ಈಗ ಇವನ್ನೆಲ್ಲ ಹೇಳಿದ್ರ’ ಐಯ್’ ಅಂತ ಬಾಯಿ ತಕ್ಕೊಂಡು ನಂಬಲಾರದ ಕೂತಿರತಾರ ಕೇಳಕೋತ. ನಮಗೂ ಅಷ್ಟೇ. ತಲಿಗೆ ಹರಸಿ ಒಂದ್ಹನಿ ಎಣ್ಣಿ ಹಚಗೊಳ್ಳದ ತಲಿಸ್ನಾನ ಮಾಡೂ ಹಂಗಿರಲಿಲ್ಲ. ಒಣ ನೀರು ಹಾಕಿಕೊಳ್ಳೂದು ಅನಿಷ್ಟ ಅಂತ ನಂಬಿಕೆ. ದ್ವಾದಶಿ ಅಂತೂ ಅಪ್ಪಿ ತಪ್ಪಿನೂ ಎರಕೊಳ್ಳೂ ಹಂಗಿರಲಿಲ್ಲ. ಇವಕ್ಕೆಲ್ಲ ಕಾರಣಗಳೂ ಹಲವಾರು ಇದ್ದಾವು! ಹುಡುಕಿ ನೋಡಿದರೆ ಸಿಕ್ಕಾವು!!

ನಮ್ಮ ಬಲಕುಂದ್ಯಾಗ ಒಬ್ಬ ಮುತ್ಯಾ ಬರತಿದ್ದರೀ. ಬಾಂಬೆ ಮಿಠಾಯಿ, ಅಜ್ಜೀ ಕೂದಲಾ ( cotton candy )ಎಲ್ಲಾ ತಗೊಂಡು. ಅವನಿಗೆ ಹೋಗಿ ನಮ್ಮ ಉದುರಿದ ಕೂದಲನ್ನ ಕೊಟ್ರ ಆ ತಿಂಡಿ ತಿನಿಸುಗಳನ್ನೆಲ್ಲ ಪುಗಸೆಟ್ಟೆ ಕೊಡತಿದ್ದ. ಅದಕ್ಕಂತ ಹೆರಳ ಆದ ಕೂಡಲೇ ನಾವೆಲ್ಲ ಮಕ್ಕಳು ಹಣಿಗೆ ಒಳಗಿನ ಕೂದಲಾ ತೆಗೆದು ಸುರಳಿ ಸುತ್ತಿ ನಮ್ಮ ನಮ್ಮ ಕೂದಲನ್ನ ಬ್ಯಾರೆ ಬ್ಯಾರೆ ಮಾಡಿಕೊಂಡು ಮನಿ ಹಿಂದಿನ ಮಾಡದಾಗ ಒಯ್ದು ಇಡತಿದ್ದ ನೆನಪು. ಬಹುಶ: ಅವುಗಳಿಂದ ಚೌರಿ ಇತ್ಯಾದಿಗಳನ್ನು ಮಾಡುತ್ತಿದ್ದರೋ ಏನೋ? ತಿರುಪತಿ – ತಿರುಮಲಗಳಲ್ಲಂತೂ ಈ ಕೂದಲುಗಳದೇ ಕೋಟ್ಯಂತರ ರೂಪಾಯಿಗಳ ಆದಾಯ ಅದ ಅಂತ್ರೀ. ಅದರಿಂದಲೇ ತಿರುಪತಿ _ತಿರುಮಲ ದೇವಸ್ಥಾನದವರು ಅನೇಕ ಆಸ್ಪತ್ರೆ, ಶಾಲಾಕಾಲೇಜುಗಳು ಧರ್ಮಛತ್ರಗಳು, ಪುನರುಜ್ಜೀವನಗಳಂಥ ಚಾರಿಟಿ ಟ್ರಸ್ಟ್ ಗಳನ್ನು ನಡೆಸುತ್ತಾರೆಂದು ಎಲ್ಲೋ ಓದಿದ ನೆನಪು.

ನಾವು ಸಣ್ಣವರಿದ್ದಾಗ ಓದೂ ಚಂದಮಾಮಾ, ಬಾಲಮಿತ್ರ ಕಥಿ ಒಳಗ ಈ ಕೂದಲೆಳೆ ತಗೊಂಡು ಕಾಲಾ ಜಾದೂ, ಮಾಟಮಂತ್ರ, ಭಾನಾಮತಿ ಮಾಡಿದಂಥ ಕಥೆಗಳನ್ನೋದಿ ಮೈ ಜುಮ್ ಅನ್ನಿಸಿಕೊಂಡಿದ್ದೂ ನೆನಪಿದೆ. ಎಲ್ಲೆರೇ ನಮ್ಮ ಕೂದಲೆಳೆಯನ್ನೂ ಯಾರರೇ ತಗೊಂಡು ಕಾಲಾಜಾದೂ ಮಾಡಿದ್ರ ಅನಸತಿತ್ತು. ಆದ್ರ ಹಂಗಾಗಲಿಕ್ಕೆ ನಾವೇನು ರಾಜಕುಮಾರಿಯರೋ, ಶ್ರೀಮಂತ ವಣಿಕ್ ಪುತ್ರಿಯರೋ, ಸುರಸುಂದರಿಯರೋ ಇರಲಿಲ್ಲ ಅನ್ನೋದು ಅರ್ಥವಾಗದ ವಯಸ್ಸು ಅದು.
ತಾಯ ಹೊಟ್ಟೆಯಲ್ಲಿ ಮಗುವಿದ್ದಾಗಲಿಂದಲೇ ಮಗುವಿನ ಕೂದಲಿನ ಅಂದಾಜು ನಡದಿರತದ್ರೀ. ನಮ್ಮ ಕಡೆಯೆಲ್ಲ 7-8 ತಿಂಗಳಿಗೆಲ್ಲ ಸ್ವಲ್ಪ ಎದೆ ಯುರಿ ಎಲ್ಲಾ ಬಂದ್ರ ‘ ಕೂಸಿಗೆ ಜಾವಳ ಭಾಳ ಇರಬೇಕು. ಅದಕ್ಕs ಎದಿ ಉರೀತದ ಅಂತಾರ ಮನ್ಯಾಗಿನ ಹಿರಿಯರು. ಕೂಸು ಹುಟ್ಟಿದ ಮ್ಯಾಲೆನೂ ಅಷ್ಟೇ. ಕೂಸು ಆರಾಂ ಅದನ? ಯಾರಂಗ ಅದ? ಜಾವಳ ಭೇಷ್ ಅವನ?ಅಂತಾನೇ ಎಲ್ಲರ ಪ್ರಶ್ನೆ. ಮುಂದ ಜಾವಳ, ಮುಂಜವಿ ಅಂತ ಈ ಕೂದಲಿಗೆ ಸಂಬಂಧಿಸಿದ ಕಾರ್ಯಕ್ರಮ ಗಳೇ. ಹೆಣ್ಣು ಮಗು ಇದ್ರ ದಿನಕ್ಕೊಂದು ಕೇಶಾಲಂಕಾರ.. ಹೂವು.. ಶೖಂಗಾರ.

“ ಹೆಣ್ಣು ಮಕ್ಕಳಿಗೆ ಕೂದಲು ಉದ್ದಾ ಇದ್ರೆ ನೋಡೋಕೇನೋ ಚಂದ. ಆದ್ರೆ ಆರೈಕೆ ಭಾಳ ಕಷ್ಟ” ಎನ್ನುತ್ತಾರೆ ನಮ್ಮ ಹೆಂಗರುಳ ಕವಿ ಎಚ್ಚೆಸ್ವಿ ತಮ್ಮ ‘ ಉರಿಯ ಉಯ್ಯಾಲೆ’ಯಲ್ಲಿ. “ ರೋಮ ರೋಮಗಳಲ್ಲಿ ಭೀಮರಕ್ಷಿಯ ಬಲ ಕೊರಳಾಗ ಕಟ್ಟೀರಿ ಒಂದಾನ” ಎಂದು ಕರಡಿ ಕುಣಿತದಲ್ಲಿ ಹೇಳುತ್ತಾರೆ ನಮ್ಮ ವರಕವಿ. ಅಂದಹಂಗ ಜಿ. ಎಸ್. ಎಸ್. ರ ಜಡೆ ನಿಮಗೆಲ್ಲ ಗೊತ್ತಿರತದ. ಆದ್ರೂ ನನ್ನ ಖುಷಿಗೆ ಮತ್ತೊಮ್ಮೆ ಇಲ್ಲಿ ಹಂಚಿಕೊಳ್ಳುತ್ತಿರುವೆ.
“ಲಲನೆಯರ ಬೆನ್ನಿನೆಡೆ ಹಾವಿನೊಲು ಜೋಲ್ವ ಜಡೆ ಅತ್ತಿತ್ತ ಹರಿದ ಜಡೆ
ಚೇಳ್ ಕೊಂಡಿಯಂಥ ಜಡೆ ಮೋಟು ಜಡೆ, ಚೋಟು ಜಡೆ ಚಿಕ್ಕವರ ಚಿನ್ನ ಜಡೆ
ಎಣ್ಣೆ ಕಾಣದೇ ಹಿಣಿಲು ಹಿಣಿಲಾಗಿ ಹೆಣೆದ ಜಡೆ
ಬೆವರಿನಲಿ, ಧೂಳಿನಲಿ ನೆನೆದುಕೊಂಡಿರುವ ಗಂಟು ಜಡೆ ಅಕ್ಕತಂಗಿಯ ಮುಡಿಯ ಹಿಡಿದು ನಾನೆಳೆದಂಥ ಮಲ್ಲಿಗೆಯ ಕಂಪು ಜಡೆ
ಮಾತೖಮಮತಾವೖಕ್ಷ ಬಿಟ್ಟ ಬಿಳಲಿನಂತೆ ಹರಿವ ತಾಯ್ ಜಡೆ ‘ ಕುರುಕುಲ ಜೀವಾಕರ್ಷಣ ಪರಿಣತ’ ಆ ಪಾಂಚಾಲಿಯ ಜಡೆ ಸಂಜೆಯಲಿ ಹಗಲು ಕೆದರುವ ಕತ್ತಲೆಯ ಕಪ್ಪು ಜಡೆ
ಬೆಳಗಿನಲಿ ಇರುಳು ಬಿಚ್ಚುವ ಬೆಳ್ಳನೆಯ ಬೆಳಕು ಜಡೆ
ಒಮ್ಮೊಮ್ಮೆ ಮುಗಿಲಲ್ಲಿ ತೇಲುತ ಬರುವಂಥ ಬೆಳ್ಳಕ್ಕಿಗಳ ಜಡೆ
ಕ್ರೌಂಚಗಳ ಜಡೆ
ಮಾಮರದಿ ಬಳುಕುತಿಹ ಹೂ ಬಿಟ್ಟ ಬಳ್ಳಿ ಜಡೆ
ಕಾಡು ಬಯಲಿನ ಹಸುರು ಹಸುರಲಿ ಹರಿ ಹರಿದು ಮುನ್ನಡೆವ ಹೊಳೆಯ ಜಡೆ
ಶ್ರೇಣಿ ಶ್ರೇಣಿಗಳಾಗಿ ಹರಿದಿರುವ ಗಿರಿಯ ಜಡೆ
ಗಿರಿಶಿವನ ಶಿರದಿಂದ ಹಬ್ಬಿ ಪಸರಿಸಿದ ಕಾನನದ ಹಸುರು ಜಡೆ
ನಕ್ಷತ್ರಗಳ ಮುಡಿದ ನಟ್ಟಿರುಳ ನಭದ ಜಡೆ
ಮುಂಗಾರು ಮೋಡಗಳು ದಿಕ್ಕು ದಿಕ್ಕಿಗೆ ಬಿಚ್ಚಿ ಹರಡಿರುವ ಮಳೆಯ ಜಡೆ
ಚಂದ್ರಚೂಡನ ವ್ಯೋಮಕೇಶನ ವಿಶ್ವವನೇ ವ್ಯಾಪಿಸುತ ತುಂಬಿರುವ ಜಡೆ
ಗಾನಗಳ, ಕಾವ್ಯಗಳ, ಶಿಲ್ಪಗಳ ಕಲೆಯ ಜಡೆ
ಎಲ್ಲವೂ ರಮ್ಯವೆಲ್ಲ! ಜಡೆಯಾಚೆ ತಿರುಗಿಸಿದ ತಾಯ ಮುಖ ಮಾತ್ರ ಇಂದಿಗೂ ಕಾಣದಲ್ಲ!!

ಒಟ್ಟಿನಾಗ ಈ ಹೆರಳು ಮಾರಿಯಿಂದ ಇಷ್ಟೆಲ್ಲ ಮಾತು ಆತು ನೋಡ್ರಿ. ಓದಿ ಹೆಂಗನ್ನಸ್ತು ಅಂತ ನಿಮ್ಮದೂ ಎರಡು ಮಾತು ಸೇರಸ್ರಿ.

~ ಗೌರಿಪ್ರಸನ್ನ

ಸ್ವರ್ಗಸ್ಥ ತಂದೆಯ ಅಭಯ ಹಸ್ತ

ಈ ವಾರದ ಪ್ರಸ್ತುತಿ ಕಥೆಗಳಲ್ಲೊಂದು ಕಥೆ, ಸ್ವಲ್ಪ ಆತ್ಮ ಕಥೆ ಸಹ. ಇದನ್ನು ಬರೆಯುವಾಗ ನನಗೆ ಸ್ವಲ್ಪ ಮುಜುಗರವಾಗುತ್ತಿದೆ. ಯಾಕೆ ಅಂತ ಮುಂದೆ ಓದಿದರೆ ನಿಮಗೇ ಗೊತ್ತಾಗುತ್ತದೆ. ಈ ವಾರವೂ ಒಂದು ಪುಸ್ತಕ ಪರಿಚಯ ಬರೆಯಲೂ ಹಿಂದೇಟು ಹಾಕುತ್ತಿದ್ದೇನೆ.ದಯವಿಟ್ಟು ಎಂದಿನಂತೆ ಓದಿ ಕಮೆಂಟ್ ಮಾಡಲು  ಮರೆಯ ಬೇಡಿ! (ಸಂ)


ಅನಿರೀಕ್ಷಿತವಾಗಿ ಕೈಗೆ ಬಂತು ಪುಸ್ತಕ
Written in stone ಎನ್ನುವ ಆಂಗ್ಲ ನುಡಿಗಟ್ಟು ಇದೆ. ಅಂದರೆ ಒಮ್ಮೆ ಹೇಳಿದ್ದು, ನಿರ್ಧರಿಸಿದ್ದು ಅದನ್ನು ಬದಲಾಗಿಸಲಾಗುವದಿಲ್ಲಂತ. ಒಮ್ಮೊಮ್ಮೆ ಅದನ್ನು carved in stone ಎನ್ನುತ್ತಾರೆ. ಭಾರತದಲ್ಲಿ ಕಾಗದ ಮತ್ತು ಅದರ ಮೇಲೆ ಪ್ರಿಂಟಿಂಗ್ ಮಾಡುವುದು ತಡವಾಗಿ ಬಂದಿತು ಅಂತ ವಸುಧೇಂದ್ರರವರು ತಮ್ಮ ’ರೇಶ್ಮೆ ಬಟ್ಟ’ ಚರ್ಚಿಸುತ್ತ ಹೇಳಿದಂತೆ ನೆನಪು. ಅದಕ್ಕೇ ನಮ್ಮ ದೇಶದಲ್ಲಿ ಐತಿಹಾಸಿಕ ದಾಖಲೆಗಳು ತಾಮ್ರ ಶಾಸನ, ಶಿಲಾ ಶಾಸನ ಅಥವಾ ತಾಳೆಗೆರೆಯ ಬರಹಗಳನ್ನು ಆಧರಿಸಿ ರೂಪಗೊಂಡಿರುವದು ಸಹಜ. ನನ್ನ ದಿವಂಗತ ತಂದೆಯವರು ಒಬ್ಬ ಇತಿಹಾಸಜ್ಞರು, ಶಾಸನತಜ್ಞರು ಅಂತ ಪ್ರಸಿದ್ಧರಾಗಿದ್ದರು. ನಾನು ಚಿಕ್ಕಂದಿನಿಂದ ನಮ್ಮ ಮನೆಯಲ್ಲಿ ಅವರ ಶಿಲಾಶಾಸನದ ಪ್ರತಿಗಳ ವೈಯಕ್ತಿಕ ಸಂಗ್ರಹವನ್ನು ನೋಡಿದ್ದು ನೆನಪಿದೆ. ಶಾಸನಗಳ ಪ್ರಾರಂಭದಲ್ಲಿ ಮೊದಲು ’ಓಮ್, ಸ್ವಸ್ತಿ, ಶ್ರೀ’ ಇತ್ಯಾದಿ ಹೇಳಿದ ನಂತರ ಒಂದು ಶಿವ ಅಥವಾ ವಿಷ್ಣು ದೇವಸ್ತುತಿಯಿರುತ್ತದೆ:
’ನಮಸ್ತುಂಗ ಶಿರಶ್ಚುಂಬಿ ಚಂದ್ರ ಚಾಮರ ಚಾರವೇ
ತ್ರೈಲೋಕ್ಯ ನಗರಾರಂಭ ಮೂಲಸ್ಥಂಭಾಯ ಶಂಭವೇ’

ಅಂತ ಕಂಡರೆ ಅದು ಶಿವಾರಾಧಕರಿಂದ. ಈ ಎರಡು ಸಾಲಿನ ಶ್ಲೋಕವನ್ನಷ್ಟೇ ಕಲಿತು ಮನನ ಮಾಡಿ ಅದರ ಆಧಾರದ ಮೇಲೆಯೇ ಕಲಿತು ಕುಕನೂರಿನ ಸುತ್ತಮುತ್ತಲ್ಲಿನ, ಗುಡಿಗಳ ಮುಂದೆ ಇದ್ದ, ಕಣ್ಣಿಗೆ ಕಂಡ, ವಿಪುಲವಾಗಿ ಅಲ್ಲಲ್ಲಿ ಸಿಕ್ಕ ಶಿಲಾಶಾಸನಗಳನ್ನು ಓದುವದನ್ನು ಅವರು ಸ್ವಾಧ್ಯಾಯದಿಂದಲೇ ಕಲಿತು ಕರಗತ ಮಾಡಿಕೊಂಡಿದ್ದಂತರಂತೆ. ನನಗೆ ಅವರ ವಿವಿಧ ಭಾಷೆಗಳಲ್ಲಿ ಬರೆದ ಐತಿಹಾಸಿಕ ಸಂಶೋಧನಾತ್ಮಕ ಲೇಖನ ಮತ್ತು ಪುಸ್ತಕಗಳ ಪರಿಚಯವಿದ್ದರೂ, (ಒಂದೆರಡು ಕಥೆಗಳನ್ನು ಬಿಟ್ಟರೆ) ಅವರು ಕಥೆಗಾರರು ಸಹ ಆಗಿದ್ದರು ಎನ್ನುವದರ ಬಗ್ಗೆ ಗಂಧವೇ ಇರಲಿಲ್ಲ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಆ ರಹಸ್ಯ ಬಯಲಾದದ್ದು, ಅಕಸ್ಮಾತ್ತಾಗಿ ಕಳೆದವಾರದಲ್ಲಷ್ಟೇ ನನ್ನ ಕೈಗೆ ಬಂದ ಯಾರೋ ಒಬ್ಬರು ಅವರ ಕಥಾಸಂಗ್ರಹವನ್ನು ಸಂಪಾದಿಸಿ ಅಚ್ಚು ಹಾಕಿಸಿದ ಪ್ರತಿ! ಅದರ ಬಗ್ಗೆ ಹೇಳುವ ಮೊದಲು ನನ್ನ ಕನ್ನಡ ಕಲಿಕೆಯ ಬಗ್ಗೆ ಒಂದು ಚಿಕ್ಕ ವಿಷಯವನ್ನು ಹೇಳಬೇಕೆಂದಿರುವೆ.
ತಮಿಳು (ಬಾಲಿಶ) ತಲೆಗಳ ನಡುವೆ 
ಈ ಶಿರ್ಷಿಕೆ ನಿಮಗೆ ಬಿ ಜಿ ಎಲ್ ಸ್ವಾಮಿ ಅವರ ಇದೇ ತರದ ಹೆಸರಿನ ಪುಸ್ತಕವನ್ನು ನೆನಪಿಗೆ ತರಬಹುದು. ಅವರು ಸಸ್ಯಶಾಸ್ತ್ರದ ಪ್ರಾಧ್ಯಾಪಕರಾಗಿ ತಮಿಳು ನಾಡಿಗೆ ಹೋಗುವ ಮೊದಲೇ ನಾನು ಹುಟ್ಟಿದ್ದು ಧಾರವಾಡದಲ್ಲಿಯಾದರೂ ಆ ನಂತರ ಊಟಿಯಲ್ಲಿ ಬಾಲ್ಯಾವಸ್ಥೆಯನ್ನು ಆರಂಭಿಸಿದ್ದೆ! ನನಗೆ ಕನ್ನಡದಲ್ಲಿ ಅಕ್ಷರಾಭ್ಯಾಸವಾದದ್ದೇ ನೆನಪಿಲ್ಲ. ತಿರುವಳ್ಳುವರ ಮೊದಲ ದ್ವಿಪದಿ ’ಅಗರ ಮೊದಲೆಳುತ್ತೆಲ್ಲಾಮ್’ ಹೇಳುವಂತೆ ಕಲಿತು, ತಮಿಳು ಶಾಲೆಗಳಲ್ಲಿಯೇ ಟೀನೇಜರ್ ಆಗುವ ವರೆಗೆ ಕಲಿತೆ. ತಮಿಳು ಮಗ್ಗಿಗಳಿಂದ ಹಿಡಿದು (ಇಂದಿಗೂ ಗುಣಾಕಾರಕ್ಕೆ ಅವುಗಳೇ ಮೊದಲು ನೆನಪಾಗುವವು) ಸಂಗಮ್ ತಮಿಳಿನ ಭೋ ಪರಾಕ್ ಹೇಳುತ್ತ ಬೆಳೆದೆ. ನಿಮಗೆಲ್ಲ ಗೊತ್ತಿರುವಂತೆ ತಮಿಳಿನಲ್ಲಿ ಮಹಾಪ್ರಾಣದ ಉಚ್ಚಾರವಿಲ್ಲ. ಕಾಗುಣಿತ ಎಂದರೇನು ಸಹ ಗೊತ್ತಿರದ ನನಗೆ ವರ್ಣಮಾಲೆಯ ನಾಲ್ಕೂ ವ್ಯಂಜನಕ್ಷರಗಳಿಗೆ ಒಂದನ್ನೇ ಉಪಯೋಗಿಸಿ ರೂಡಿ. ನಾವು ಮೂವರು ಅಣ್ಣತಮ್ಮಂದಿರು ನಮ್ಮೊಳಗೆ ಮಾತನಾಡುತ್ತಿದ್ದುದು ತಮಿಳಿನಲ್ಲಿಯೇ. ಇಲ್ಲಿಯ ನಮ್ಮ ಮಕ್ಕಳಲ್ಲೂ ಸಾಮಾನ್ಯವಾಗಿ ಇದೇ ತರಹದ ಅನುಭವವನ್ನು ಕಾಣುತ್ತೇವೆ ಎನ್ನ ಬಹುದು, ಕೆಲವು ಅಪವಾದಗಳನ್ನು ಬಿಟ್ಟರೆ. ಅದಕ್ಕೇ ನಮ್ಮ ತಂದೆ ನಮ್ಮನ್ನು ’ಅಲ್ಪಪ್ರಾಣಿಗಳು ನೀವು’ ಕೊಂಗರ ಭಾಷೆಯನ್ನು ಮಾತಾಡ ಬೇಡಿ, ಅಂತೆಲ್ಲ ಟೀಕಿಸುತ್ತಿದ್ದರು. ತಾವಾಯಿತು, ತಮ್ಮ ಲೇಖನಗಳಾಯಿತು ಅಂತ ಯಾವಾಗಲೂ ಬರಹದಲ್ಲಿ ಮುಳುಗಿರುತ್ತಿದ್ದ ಅವರು ಒಂದು ಉಪಕಾರವನ್ನು ಮಾಡದಿರಲಿಲ್ಲ. ಕನ್ನಡ ಅಕ್ಷರಗಳನ್ನು ಕಲಿಸಿದ್ದು ಮತ್ತೆ ತಾವು ವಿಪುಲವಾಗಿ ಕನ್ನಡ ಪತ್ರಿಕೆಗಳಲ್ಲಿ ಬರೆಯುತ್ತಿದ್ದ ಅಂಕಣಗಳು ಮತ್ತು ಕರ್ಮವೀರದಂಥ ನಿಯತ ಕಾಲಿಕಗಳಲ್ಲಿ ಮತ್ತು ಎರಡು ಮೂರು ಪತ್ರಿಕೆಗಳ ದೀಪಾವಳಿ ವಿಶೇಷಾಂಕಗಳಲ್ಲಿ ಬರೆಯುತ್ತಿದ್ದ ಲೇಖನಗಳನ್ನು ನನಗೆ ಕೊಟ್ಟು ಅವುಗಳ ಕಾಪಿ ಮಾಡಿಸುತ್ತಿದ್ದರು, ನಮಗೆ ಕನ್ನಡದ ರೂಢಿಯಾಗಲೆಂದು. ಆದರೆ ಕಥೆ ಪುಸ್ತಕ, ಕನ್ನಡ ಪಠ್ಯ ಪುಸ್ತಕಗಳನ್ನು ಧಾರವಾಡಕ್ಕೆ ಹನ್ನೆರಡನೇ ವರ್ಷದಲ್ಲಿ ಬರುವ ವರೆಗೆ ಕಂಡಿರಲಿಲ್ಲ.

ಕ್ಲಾಸ್ ತುಂಬ ಹಲ್ ಕಟ್ಟರು!
ಹಟಾತ್ತನೆ ಪಠ್ಯಕ್ರಮದ ಮಾಧ್ಯಮ ಒಮ್ಮೆಲೆ ತಮಿಳಿನಿಂದ ಕನ್ನಡಕ್ಕೆ ಓವರ್ನೈಟ್ ಬದಲಾದ ಕೂಡಲೇ ನಮಗೆ ಆದದ್ದು systemic shock! ಯಾರಾದರೂ ಮಾತನಾಡಿಸಿದರೆ ಉತ್ತರ ಹೇಳಲು ಬಾಯಿ ತೆರೆದಾಗ ಬಾಯಿಂದ ಹೊರಬೀಳುತ್ತಿದ್ದುದು ತಮಿಳಿನ ’ಜಿಬ್ಬರಿಷ್’ ಅಂತ ಸಹಪಾಠಿಗಳ ಕಂಪ್ಲೇಂಟ್! ಏನು ಬಡಬಡಿಸುತ್ತಾ ಇದ್ದೀಯಾ, ಅನ್ನಬೇಕು ಅರ್ಥವಾಗದ ಹುಡುಗರೆಲ್ಲ! ತಮಿಳು ನಾಡಿನಲ್ಲಿ ಅವರಿಗೆ ಅಡ್ಡ ಹೆಸರಿಲ್ಲ. ಉತ್ತರ ಕರ್ನಾಟಕದ ಗಂಡುಮೆಟ್ಟಿನ ಸ್ಥಳವಾದ ಧಾರವಾಡದಲ್ಲಿ ಒಂದಕ್ಕೆ ನಾಲ್ಕು ಅಥವಾ ಆರರವರೆಗೆ ಒಂದು ಕ್ಲಾಸಿನಲ್ಲಿ ಕುಲಕರ್ಣಿ, ಪಾಟೀಲ, ’ಮನಿ’ಗಳು (ಮುಂದಿನ ಮನಿ, ಹಿತ್ತಲಮನಿ, ಮಿಟ್ಟಿಮನಿ,ಮೇಲ್ಮನಿ, ದೊಡ್ಮನಿ ಇತ್ಯಾದಿ) ಇರುತ್ತಿದ್ದರು! ವಿವಿಧ ’ಕಟ್ಟಿ’ಗಳ ಅಡ್ಡಹೆಸರಿನ ನಾಮಧೇಯ ಹೊತ್ತ ಸಾಧು ಹುಡುಗರು ಸಹ ಇದ್ದರು. ಇದೆಲ್ಲ ನಮಗೆ ಹೊಸತು; ಮತ್ತು ತಮಾಷೆ, ಸಹ! ಕ್ಲಾಸಿನಲ್ಲಿ ಪೀರಿಯಡ್ ಗಳ ಮಧ್ಯೆ, ’ಬ್ರೆಕ್’ ವಿರಾಮದಲ್ಲಿ ಗೋಲಿ (marbles) ಆಟ. ಅಂದರೆ ಜಗಳಾಟ. ಒಬ್ಬ ಹುಡುಗನನ್ನು ರೇಗಿಸುತ್ತಿದ್ದಾಗ ಆತ ಎಲ್ಲರನ್ನೂ ಬೈಯುತ್ತ ’ಅಂವ ಒಬ್ಬ ಹಲಕಟ್ಟ, ಇಂವ ಒಬ್ಬ ಹಲಕಟ್ಟ, ಎಲ್ಲರೂ ಸೂ...ಮಕ್ಕಳು’ ಅಂತ ಶಿಷ್ಟ ಭಾಷೆಯಲ್ಲಿ ಮಂತ್ರ ಪುಷ್ಪ ತೂರುತ್ತಿದ್ದ. ಆ ದಿನ ಸಂಜೆಗೆ ಮನೆಗೆ ಹೋಗಿ ನಾವು ಆ ದಿನದ ಶಾಲೆಯ ವೃತ್ತಾಂತವೆಲ್ಲವನ್ನೂ ತಾಯಿಗೆ ಒಪ್ಪಿಸುವುದು. ಆಕೆ ಎಲ್ಲವನ್ನು ಲಕ್ಷ್ಯಗೊಟ್ಟು ಕೇಳಿ ನಮ್ಮನ್ನು ಸಾಂತ್ವನ ಮಾಡುತ್ತ ಹುರಿದುಂಬಿಸುತ್ತಿದ್ದರು. ತಾಳ್ಮೆಯಿಂದ ಕೇಳುತ್ತಿದ್ದರು ಅವ್ವ. ಆಕೆಗೆ ಗೊತ್ತು, ಕನ್ನಡ ನಾಡಿನಲ್ಲಿ ತಮಿಳು ತಲೆಗಳಾಗಿದ್ದ ನಮ್ಮ ಪರದಾಟ! ಟಾಕು ಮಸಿ ದೌತಿ, ಬರೆಯಲು ಕಾಗದ, ಇವುಗಳ ಸಮುದ್ರದಲ್ಲಿ ತಂದೆಯವರು ಯಾವಾಗಲೋ ಕಳೆದು ಹೋಗಿರುತ್ತಿದ್ದರು. ಆ ದಿನ ನಾನು ಕೊಟ್ಟ ವರದಿ ನಮ್ಮ ಕ್ಲಾಸಿನಲ್ಲಿ ಒಂದೇ ಅಡ್ಡ ಹೆಸರಿನ ನಾಮಧಾರಿಗಳ ಲೇಟೆಸ್ಟ್ ’ಸ್ಕೋರ್’ ಹೇಳುತ್ತ, ’ನಮ್ಮ ಕ್ಲಾಸಿನಾಗ ಈಗ ನಾಲ್ಕು ಹಲಕಟ್ಟರು ಭರ್ತಿಯಾಗ್ಯಾರ’ ಅಂದೆ. ಅದನ್ನು ಕೇಳಿ ಬಿದ್ದು ಬಿದ್ದು ನಕ್ಕ ನಮ್ಮ ತಾಯಿ ’ಬರೀ ನಾಲ್ಕೇ? ನೀವು ಹೋಗೋ ಆ ಸಾಲಿ ಪ್ರಸಿದ್ಧ ಅದs. ಒಂದಿಪ್ಪತ್ತು ಹಲಕಟ್ಟರಾದರೂ ಸಿಗತಾರ ಆ ಸಾಲ್ಯಾಗ!’ ಅಂತ ಹೇಳಿ, ಆ ’ಬಿರುದಿನ’ ಅರ್ಥವನ್ನು ತಿಳಿಸಿ ಹೇಳಿದ್ದು ಇನ್ನೂ ನೆನಪಾಗುತ್ತದೆ, ಇದನ್ನು ಬರೆಯುವಾಗ. ವಾಯವ್ಯ ಗೊತ್ತಿಲ್ಲ; ಅವಯವದಂತೆ ಅವ್ವುಯ್ಯನೂ ಒಂದು ದೇಹದ ಭಾಗವನ್ನೇ ಸೂಚಿಸುತ್ತದೆಯೇ ಅಂತ ನಮಗೆ ಗೊಂದಲ. ಅವೆಲ್ಲವನ್ನು ಹಿಂದೆ ಹಾಕಿ ಅದು ಹೇಗೆ ಕನ್ನಡ ಕಲಿತೆವು ಅನ್ನುವ ವಿಷಯ ನನಗೆ ಇನ್ನೂ ವಿಸ್ಮಯದಾಯಕ!

ಅದ್ಯಾವ ಪುಸ್ತಕ?
ನನ್ನ ಕೈಗೆ ಸಿಕ್ಕ ಪುಸ್ತಕವೆಂದರೆ ಈಗ ತಾನೆ ಅಚ್ಚಿನ ಮನೆಯಿಂದ ಹೊರಬಿದ್ದ ೧೯೫೧ ರಿಂದ ೧೯೫೩ರರ ಮಧ್ಯದಲ್ಲಿ ಹುಬ್ಬಳ್ಳಿಯಿಂದ ಪ್ರಕಟವಾಗುತ್ತಿದ್ದ ಕರ್ಮವೀರ ವಾರ ಪತ್ರಿಕೆಯಲ್ಲಿ ನನ್ನ ತಂದೆಯವರು (ಡಾ ಪಾಂಡುರಂಗ ದೇಸಾಯಿ) ಮಕ್ಕಳಿಗಾಗಿ ವಾರ ತಪ್ಪದೆ ಬರೆದ ಕಥೆಗಳ ಗುಚ್ಛ. ಬೇರೆ ಒಂದು ಪ್ರಾಜೆಕ್ಟ್ ಸಲುವಾಗಿ ಧಾರವಾಡದ ಕಿಟಲ್ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದ ಲೇಖಕ-ವಿಮರ್ಶಕ ಡಾ ಜಿ ಎಂಹೆಗಡೆಯವರು ಹುಬ್ಬಳ್ಳಿಗೆ ಹೋಗಿ ಹೋಗಿ ಈಗ ಝಿರಾಕ್ಸ್ ಮಾಡಿ ಪುಡಿಪುಡಿಯಾಗುತ್ತಿರುವ ಹಾಳೆಗಳ ಪ್ರತಿಗಳನ್ನು ಸಂಗ್ರಹಿಸಿ ಸಂಪಾದಿಸಿದ್ದು. ಅದು ಇನ್ನೂ ಲೋಕಾರ್ಪಣೆಯಾಗಿಲ್ಲ. ನನಗೆ ತುರ್ತು ಸುದ್ದಿ ತಲುಪಿಸೋಣ ಎಂದು ಫೋನು ಮಾಡಿದಾಗ ಅವರಿಗೆ ತಿಳಿಸಿ ವಿನಂತಿಸಿದೆ. ಅಕಸ್ಮಾತ್ತಾಗಿ ಒಂದು ವಾರದ ನಂತರ ಯು ಕೆ ಗೆ ಪ್ರಯಾಣಮಾಡುತ್ತಿದ್ದ ನನ್ನ ಮಿತ್ರರಿಗೆ ಆ ಪುಸ್ತಕದ ಎರಡು ಪ್ರತಿಗಳನ್ನು ಕಳಿಸಿದರು. ಅದರ ಹೊದಿಕೆಯನ್ನು ಇಲ್ಲಿ ಹಂಚಿಕೊಂಡಿದ್ದೇನೆ. ಅದರ ಹಿನ್ನುಡಿಯಲ್ಲಿ ಮೂಲ ಲೇಖಕರ ವಿವರದೊಂದಿಗೆ ಕಥೆಗಳ ವಿಸ್ತಾರದ ಪರಿಚಯ ಸಹ ನಿಮಗೆ ಓದಲು ಸಿಗುತ್ತದೆ. ಅವುಗಳ ಬಗ್ಗೆ ಸವಿಸ್ತಾರದ ವಿಮರ್ಶೆ ಮಾಡಲಾರೆ ಮತ್ತು ನನ್ನಿಂದ ಅದು ಉಚಿತವೂ ಅಲ್ಲ. ಅದನ್ನು ಓದುಗ ಪ್ರಾಜ್ಞರಿಗೆ ಬಿಟ್ಟಿದ್ದು. ನನಗೆ ಮಾತ್ರ ನನ್ನ ತಂದೆ ಮಕ್ಕಳ ಕಥೆಗಳನ್ನು ಸಹ ಬರೆದಿದ್ದರು ಎನ್ನುವ ಸುದ್ದಿ ಗೊತ್ತೇ ಇರಲಿಲ್ಲ, ಅದು ಮಾತ್ರ ಸತ್ಯ. ಇತಿಹಾಸದ ಸಂಬಂದಿಸಿದ ಕಥೆ ಕಾದಂಬರಿ, ಮತ್ತು ವೈಚಾರಿಕ, ಸಂಶೋಧನಾತ್ಮಕ ಕೃತಿಗಳನ್ನು ಬರೆದುದ್ದುದು ಮಾತ್ರ ನನಗೆ ಗೊತ್ತಿತ್ತು. ಈಗ ೭೫ ವರ್ಷಗಳ ಹಿಂದಿನ ವಿವಿಧ ವಿಷಯಗಳನ್ನು ವಸ್ತುವಾಗಿಟ್ಟುಕೊಂಡು ಅವರು ಬರೆದ ಕಥೆಗಳು ಇದರಲ್ಲಿವೆ. ಕೆಲವುಗಳಲ್ಲಿ ಹಿತೋಪದೇಶದಲ್ಲಿದ್ದಂತೆ ಮಾತಾಡುವ ಪ್ರಾಣಿಗಳ ಪಾತ್ರಗಳನ್ನು ಸೃಜಿಸಿದ್ದಿದೆ. ಪುಸ್ತಕದ ಪರಿಚಯವನ್ನಷ್ಟೇ ಮಾಡುವುದು ಈ ಲೇಖನದ ನನ್ನ ಉದ್ದೇಶವಾಗಿತ್ತು. ಆಸಕ್ತರಿಗೆ ಬೇಕಾದ ಉಳಿದ ವಿವರಗಳು ಕವರ್ ಚಿತ್ರದಲ್ಲಿ ಸಿಗುತ್ತವೆ. ಸಂಪಾದಿಸಿ ಪ್ರಕಟಿಸಿದ ಡಾ ಜಿ ಎಂ ಹೆಗಡೆಯವರಿಗೆ ಮತ್ತು ಇಲ್ಲಿಗೆ ತಂದು ಪೋಸ್ಟ್ ಮಾಡಿದ ನನ್ನ ಮಿತ್ರ ಡಾ ಶಿವಶಂಕರ್ ಅವರಿಗೂ ಹೃತ್ಪೂರ್ವಕ ಕೃತಜ್ಞತೆಗಳು.

ಲೇಖನ ಮತ್ತು ಚಿತ್ರಗಳು: ಶ್ರೀವತ್ಸ ದೇಸಾಯಿ