ಬಾಸ್ವರ್ತ್ ಯುದ್ಧರಂಗ ಎನ್ನುವ ಇಂಗ್ಲೆಂಡಿನ ಪ್ರೇಕ್ಷಣೀಯ ಸ್ಥಳ -ಶ್ರೀವತ್ಸ ದೇಸಾಯಿ

ಒಂದು ರೀತಿಯಿಂದ ಇದು ಇಂಗ್ಲೆಂಡಿನ ದೊರೆ ಮೂರನೆಯ ರಿಚರ್ಡ್ ನ ಇತಿಹಾಸದ ಬಗ್ಗೆ ನಾನು ಬರೆದ ಲೇಖನದ (https://wp.me/p4jn5J-3Sw) ಹಿಂದೆ ಸರಿದ ಭಾಗ! ಅದರಲ್ಲಿ ಆತನ ಮರಣದ ನಂತರದ ಘಟನೆಗಳ ವಿಶ್ಲೇಷಣೆಯಿದ್ದರೆ ಇದರಲ್ಲಿ ಆತ ಸಾವನ್ನಪ್ಪಿದ ಜಾಗದ ಸ್ಥಳಪುರಾಣ ಇದೆ. ಅಲ್ಲಿ ನೋಡುವದೇನು ಇದೆ? ಇದೇ ಪ್ರಶ್ನೆಯನ್ನು ಸ್ಟೇನ್ಸ್ಟಪಕ್ಕದ ರನ್ನಿಮೀಡ್ ಬಗ್ಗೆಯೂ ಕೇಳಬಹುದು. ಅಲ್ಲಿ ಮ್ಯಾಗ್ನಾ ಕಾರ್ಟಾದ ಮೇಲೆ ಸಹಿ ಆಗಿತ್ತು. ಅಲ್ಲಿ ಇತಿಹಾಸವಿದೆ. ಇಂಥ ಐತಿಹಾಸಿಕ ಸ್ಥಳಗಳಲ್ಲೆಲ್ಲ ಅದರ ಹಿಂದಿನ ಐತಿಹಾಸಿಕ ಸಂಗತಿಗಳೇ ರೋಚಕ. ಇತಿಹಾಸ ಎದ್ದು ಬರುತ್ತದೆ; ವ್ಯಕ್ತಿಗಳು, ರಾಜರು ಜೀವ ತಳೆದು ಮಾತಾಡುತ್ತಾರೆ! ಒಂದು ವಿಷಯ: ನಾವು ಲ್ಯಾಂಕಾಸ್ಟರಿನ ಕೆಂಪು ಮತ್ತು ಯಾರ್ಕ್ ಶೈರಿನ ಬಿಳಿ ಗುಲಾಬಿ ಲಾಂಛನಗಳ ಬಗ್ಗೆ ಓದುತ್ತೇವೆ. ಆದರೆ ಅವುಗಳು ಆಗ ಲಾಂಛನವಾಗಿರಲಿಲ್ಲ. ಸೈನಿಕರು ಹೊತ್ತ ಬಿಳಿ ಬ್ಯಾಜಿನ ದಾಖಲೆ ಮಾತ್ರ ಇದೆ. ಶೇಕ್ಸ್ಪಿಯರನ ನಾಟಕದಲ್ಲಿ ಮತ್ತು ನಂತರದ ಹತ್ತೊಂಬತ್ತನೆಯ ಶತಮಾನದ ಬರವಣಿಗೆಗಳಲ್ಲಿ ಈ ಸಂಜ್ಞೆಗಳಿಗೆ ಪ್ರಚಾರ ಬಂದಿತು. -(ತತ್ಕಾಲ ಸಂ!)
king-richard-iii-
ಮೂರನೆಯ ರಿಚರ್ಡ್                             ಮೊದಲು ಸ್ವಲ್ಪ ಇತಿಹಾಸ

ಮೇಲಿನ ಮಾತುಗಳ ಅರ್ಥವಾಗಲು ಕೆಲವು ಐತಿಹಾಸಿಕ ವಿಷಯಗಳನ್ನು ಅರಿತುಕೊಳ್ಳಬೇಕಾಗುತ್ತದೆ. ಬಹಳಷ್ಟು ಜನರಿಗೆ  ಇಂಗ್ಲೆಂಡಿನ ಎರಡು ಎರಡು ಪ್ರಮುಖ ರಾಜವಂಶ ಪಂಗಡಗಳಾದ ಲ್ಯಾಂಕಾಸ್ಟರ್ ಮನೆತನ (ಲಾಂಛನ ಕೆಂಪು ಗುಲಾಬಿ) ಮತ್ತು ಯಾರ್ಕ್ ಮನೆತನಗಳ (ಬಿಳಿ ಗುಲಾಬಿ) ಮಧ್ಯೆ 30 ವರ್ಷಗಳ ಕಾಲ ನಡೆದ 15 ಯುದ್ಧಗಳ ಬಗ್ಗೆ (”ದ ಬ್ಯಾಟಲ್ ಆಫ್ ದಿ ರೋಸಸ್”) ಗೊತ್ತಿದ್ದರೂ ಅದು ಮುಕ್ತಾಯವಾದ ಬಾಸ್ವರ್ತ್ಎನ್ನುವ ಊರಿನ ಹತ್ತಿರದ ಈ ತಗ್ಗು, ದಿನ್ನೆ ಮತ್ತು ಚೌಗು ಪ್ರದೇಶದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿರಲಿಕ್ಕಿಲ್ಲ. ಧರ್ಮಕ್ಷೇತ್ರವಾದ ಕುರುಕ್ಷೇತ್ರದಲ್ಲಿ ಕಾದ ದಾಯಾದಿಗಳಾದ ಕೌರವ ಪಾಂಡವರಂತೆಯೇ ಇಂಗ್ಲೆಂಡಿನ ಕಿರೀಟಕ್ಕಾಗಿ ಹೋರಾಡಿದ ಈ ಎರಡೂ ಮನೆತನಗಳೂ 14 ನೆಯ ಶತಮಾನದಲ್ಲಿ ಆಳಿದ ಮೂರನೆಯ ಎಡ್ವರ್ಡ್ ಪ್ಲಾಂಟಾಂಜನೆಟ್ ದೊರೆಯ ಸಂತತಿಗಳೇ! ಅ ಕರಾಳ ದಿನ ಬೆಳಗಿನ ಸಮಯ (22ನೆಯ ಆಗಸ್ಟ್, 1485) ಬಾಸ್ವರ್ತ್ ಯುದ್ಧದಲ್ಲಿ ಮೂರನೆಯ ರಿಚರ್ಡ್ ಇಂಗ್ಲೆಂಡಿನ ಪಟ್ಟಕ್ಕಾಗಿ ಎದುರಾಳಿಯಾದ (ಮುಂದೆಏಳನೆಯ ಹೆನ್ರಿ ಎಂದು ಕರೆಯಲ್ಪಡಲಿರುವ)  ಹೆನ್ರಿ ಟ್ಯೂಡರ್ ನ ದಂಡಿನ ಮೇಲೆ ರಾಜ ಸ್ವತಃ ಏರಿ ಹೋದಾಗ ತಲೆಗೆ ವೈರಿಯ ಹ್ಯಾಲ್ಬರ್ಡ್ (halberd) ಎನ್ನುವ ಭೀಕರ ಶಸ್ತ್ರದ ಪ್ರಹಾರದಿಂದ ಮರಣಹೊಂದಿದ. ಆತನ ಕುದುರೆಯ ಕಾಲುಗಳು ಕೆಸರಿನಲ್ಲಿ ಸಿಕ್ಕಿಕೊಂಡಿದ್ದರಿಂದ ಕೆಳಗಿಳಿಯಬೇಕಾಗಿ ಅಲ್ಲಿಂದಲೆ ಧೈರ್ಯದಿಂದ ಮುನ್ನುಗ್ಗಿದ್ದ ರಿಚರ್ಡ್ ಯುದ್ಧರಂಗದಲ್ಲಿ ಮೃತನಾದ ಇಂಗ್ಲೆಂಡಿನ ಕೊನೆಯ ಅರಸನೂ ಆಗಿದ್ದಾನೆ. ಆತ ಆಳಿದ್ದು ಬರೀ ಹದಿನಾಲ್ಕು ವರ್ಷ ಮಾತ್ರ.

ಬಾಸ್ವರ್ತ್ ಯುದ್ಧರಂಗ

ನೆರಳು ಗಡಿಯಾರ (Sun dial with the crown of Richard III)

ಧರ್ಮಕ್ಷೇತ್ರೇ ಕುರುಕ್ಷೇತ್ರೇ!

ಆಗ ಪ್ರಾಟೆಸ್ಟೆಂಟ್ ಮತ ಹುಟ್ಟಿರಲಿಲ್ಲ. ರಿಚರ್ಡನ ಪೂರ್ವಜರಿಗೆ ಫ್ರಾನ್ಸ್ ದೇಶದ ಸಂಬಂಧವಿತ್ತು ಅಂತ ಆತನೂ ಕ್ಯಾಥಲಿಕ್ ಆಗಿದ್ದ. ಆತ ಮೃತನಾದ ಮೇಲೆ ಆತನ ದೇಹವನ್ನು ಹತ್ತಿರದ ಲೆಸ್ಟರಿನ ಫ್ರಾನ್ಸಿಸ್ಕನ್ ಫ್ರಯರಿ ಚರ್ಚಿನಲ್ಲಿ ಗಡಿಬಿಡಿಯಿಂದ ಮಣ್ಣು ಮಾಡಲಾಗಿತ್ತು. ಅದರ ಗುರುತುಗಳೆಲ್ಲ ಮಾಯವಾಗಿದ್ದವು. ಮುಂದೆ ಆ ಸ್ಥೂಲಕಾಯದ, ಷಟ್ಪತ್ನಿವ್ರತ (!) ಎಂಟನೆಯ ಹೆನ್ರಿ ಪೋಪನನ್ನು ಮಾನ್ಯ ಮಾಡದೆ ಪ್ರಾಟೆಸ್ಟೆಂಟ್ ಆದ. ಆತ ಫ್ರಯರಿಗಳನ್ನು (Friary) ರದ್ದುಗೊಳಿಸಿದ. ಸೋರ್ ನದಿಯಲ್ಲಿ ರಿಚರ್ಡನ ಅಸ್ಥಿಯನ್ನು ಚೆಲ್ಲಲಾಯಿತೆಂದೆಲ್ಲ ವದಂತಿ ಹಬ್ಬಿತ್ತು. ಅದಕ್ಕೆ ಅದನ್ನು ಪತ್ತೆ ಹಚ್ಚಲು ಐದು ಶತಮಾನಗಳೇ ಬೇಕಾಯಿತು. ಆತನ ನಿಷ್ಟ ಅಭಿಮಾನಿಗಳ ಪ್ರಯತ್ನದಿಂದ ಸಂಶೋಧನೆ ಪ್ರಾರಂಭವಾಗಿ ಆ ಚರ್ಚಿನ ಗುರುತು ಹಿಡಿದು ಕಾರ್ ರ್ಪಾರ್ಕಿನಡಿ ಉತ್ಖನನ ಮಾಡಿ ರಿಚರ್ಡನನ್ನು ವಿಜೃಂಭ್ಹಣೆಯಿಂದ ಲೆಸ್ಟರ್ ಕೆಥಿಡ್ರಲ್ನಲ್ಲಿ ಸಮಾಧಿ ಮಾಡಿದ್ದು ಕ್ಯಾಥಲಿಕ್ ಮತದ ಕ್ರಿಶ್ಚಿಯನ್ನರಿಗೆ ಅಸಮಾಧಾನವಾಗಿತ್ತು! 

ಕೊನೆಯುಸಿರೆಳೆದವರೆಷ್ಟು ಜನ?

ಹಾಗೆ ನೋಡಿದರೆ ಒಂದು ಸಾವಿರ ಜನ ಮೃತರಾದರೂ, ಎರಡೂ ಕಡೆ ಸೇರಿ ಪಾಲುಗೊಂಡ 22,000 ಯೋಧರ ಸಂಖ್ಯೆ ಕುರುಕ್ಷೇತ್ರದ ಹದಿನೆಂಟು ಅಕ್ಷೌಹಿಣಿ ಸೈನ್ಯಕ್ಕೆ ಹೋಲಿಸಲಾಗದು. ಅದರಲ್ಲಿ ಎರಡುಸಾವಿರ ಯೋಧರು ಫ್ರಾನ್ಸಿನಿಂದ ಬಂದ ಕೂಲಿ ಸೈನಿಕರು (mercenaries). ಈ ದೇಶದ ಅತ್ಯಂತ ಭೀಕರವಾದ ಯಾದವೀ ಕಾಳಗವೆಂದು ಪ್ರಸಿದ್ಧವಾದ ಐವತ್ತು ಸಾವಿರ ಜನ ಭಾಗವಹಿಸಿದ್ದ ಟೌಟನ್ ಯುದ್ಧಕ್ಕೆ ಸಮ ಇದು ಆಗಿರಲಿಲ್ಲ. ಆದರೂ ಇದು ಈ ದೇಶದ ಇತಿಹಾಸಕ್ಕೆ ಅತ್ಯಂತ ಮಹತ್ವದ ತಿರುವು ಕೊಟ್ಟಿತ್ತು. ರಿಚರ್ಡನ ಪತನದಿಂದ ಇಂಗ್ಲೆಂಡಿನ ದೊರೆಯಾದ ಏಳನೆಯ ಹೆನ್ರಿ ಯಾರ್ಕ್ ಮಹಿಳೆಯನ್ನು ಮದುವೆಯಾಗಿ ಎರಡೂ ಪಂಗಡಗಳನ್ನು ಒಂದುಗೂಡಿಸಿದ. ಆತನ ಲಾಂಛನವೇ ಮುಂದೆ ಬಿಳಿ-ಕೆಂಪು ಎರಡೂ ಬಣ್ಣದ ಹೂಗಳೊಂದಿಗೆ ಟ್ಯೂಡರ್ ರೋಸ್ ಆಯಿತು.

ರಿಚರ್ಡನ ಕೊನೆಯ ಮಾತುಗಳು

ಬಾಸ್ವರ್ತ್ ರಣರಂಗದ ಸುತ್ತಲೂ ನಡೆದಾಡಲು ಅನುಕೂಲವಾಗುವ ಪಥ ಅದೆ. ಅಲ್ಲಲ್ಲಿ ಉತ್ತಮ ಮಾಹಿತಿ ಫಲಕಗಳನ್ನು ನಿರ್ಮಿಸಿದ್ದರಿಂದ 500 ವರ್ಷಗಳ ಹಿಂದಿನ ಇತಿಹಾಸ ಜೀವ ತಳೆದು ಸಮರ ಇದುರಿಗೇ ನಡೆಯುತ್ತಿದೆಯೇನೋ ಅಂತ ರೋಮಾಂಚನವಾಗುತ್ತದೆ. ಕುದುರೆಗಳ ಖುರಪುಟ, ಕತ್ತಿ ಗುರಾಣಿಗಳ ಘರ್ಷಣೆಯ ಖಟ್ – ಖಡಲ್, ಮರಣವನ್ನಪ್ಪುತ್ತಿರುವ, ಗಾಯಗೊಂಡ ಸೈನಿಕರ ಆರ್ತ ನಾದ, ಕಿವಿಯನ್ನು ಗಡಚಿಕ್ಕುತ್ತವೆ. ಇಂಥ ಕಾಳಗಗಳಲ್ಲಿ ಕುದುರೆ ಸವಾರರದೇ ಮೇಲುಗೈಯೆಂದ ಮೇಲೆ ಕುದುರೆಯನ್ನು ಕಳೆದುಕೊಂಡು ಕುದುರೆಯಿಂದ ಕೆಳಕ್ಕುರುಳಿದ ರಿಚರ್ಡ್ ದೊರೆ ’ಒಂದು ಕುದುರೆಗಾಗಿ ಏನನ್ನು (ನನ್ನ ರಾಜ್ಯವನ್ನೂ) ಕೊಡಲಾರೆ” ಅಂದನಂತೆ. ಆತನ ಕಿರೀಟ ಹಾರಿತ್ತು ಎದುರಾಳಿಗಳ ಭರ್ಚಿ-ಕೊಡಲಿ ಕೂಡಿದ ಹ್ಯಾಲ್ಬರ್ಡ್ ಶಸ್ತ್ರದಿಂದ ಭೀಕರ ಹತ್ಯೆಯಾಯಿತು..ಶೇಕ್ಸ್ಪಿಯರನ ನಾಟಕದ ಪ್ರಸಿದ್ಧ ಸಾಲುಗಳ ಪ್ರಕಾರ “A horse, a horse, My kingdom for a horse” ಅಂತ ಕನವರಿಸುತ್ತ ಮಡಿದನಂತೆ

ರಾಜನ ಕೊನೆಯ ನೀರಿನ ಗುಟುಕು?

ಬಾಸ್ವರ್ತ್ ರಣಭೂಮಿಯ ಸುತ್ತಿನ ದಾರಿಯ ಹದಿನೇಳನೆಯ ಮತ್ತು ಕೊನೆಯ ವೀಕ್ಷಣಾ ಸ್ಥಾನದಲ್ಲಿ ಹತ್ತೊಂಬತ್ತನೆ ಶತಮಾನದಲ್ಲಿ ಊರ್ಜಿತವಾದ ಒಂದು ಕಲ್ಲುಗುಡ್ಡೆ (Cairn) ಇದೆ. ಅದು ಅಲ್ಲಿ ಹರಿವ ನೀರಿನ ಸೆಲೆಯ ಮೇಲೆ ಕಟ್ಟಲಾಗಿದೆ ಅನ್ನುತ್ತದೆ ಒಂದು ಫಲಕ. ಅದರ ಪಕ್ಕದಲ್ಲೇ ರಿಚರ್ಡನ ಸೈನ್ಯಯುದ್ಧ ಪೂರ್ವ ’ಡೇರೆ’ ಹಾಕಿತ್ತು. ಅಲ್ಲಿಯೇ ಆತ ಕೊನೆಯ ಬಾರಿ ನೀರು ಕುಡಿದನೆಂದು ಪ್ರತೀತಿ. ಆ ಸ್ಥಳವನ್ನು ಇಂದಿಗೂ ನೋಡಿ ನಿಮ್ಮ ಇತಿಹಾಸ ಪಿಪಾಸೆಯನ್ನು ತಣಿಸಿಕೊಳ್ಳಬಹುದು.

ಕೊನೆಗೂ ವಿಜ್ಞಾನದ ತೀರ್ಪು

ಯುದ್ಧದ ನಾಮೋ ನಿಶಾನೆ ಎಲ್ಲ ಅಳಿಸಿ ಹೋಗಿರುವಾಗ ಈ ಜಾಗದಲ್ಲೇ ಆ ರಣರಂಗವಿತ್ತು ಅಂತ ಹೇಗೆ ಸಾಬೀತು ಮಾಡಲಾಯಿತು? ಅದಕ್ಕೆ ಸಹಾಯ ಬಂದುದು ಆಧುನಿಕ ಕಾರ್ಬನ್ ಡೇಟಿಂಗ್ ವಿಜ್ಞಾನ. ಈ ದೇಶದಲ್ಲಿ ಅತ್ಯಂತ ಹಳೆಯ ಚರ್ಚುಗಳಲ್ಲೂ ಉಳಿದಿರುವ ದಾಖಲೆಗಳು ಇತಿಹಾಸವನ್ನು ಜೋಡಿಸಲು ಬಹಳ ಸಹಾಯ ಮಾಡುತ್ತವೆ. ಹುಟ್ಟು, ಬಾಪ್ಟಿಸಮ್ (ನಾಮಕರಣ), ಮದುವೆ, ಶವಸಂಸ್ಕಾರದ ದಾಖಲೆಗಳನ್ನು ಮುತವರ್ಜಿಯಿಂದ ಕಾದಿಡಲಾಗುತ್ತದೆ. ಪಕ್ಕದ ಡಾಡ್ಲಿಂಗ್ಟನ್ ಚರ್ಚಿನ ಶವಸಂಸ್ಕಾರ ದಾಖಲೆಗಳಿಂದ ಇತಿಹಾಸದ ತುಣುಕುಗಳನ್ನು ಜೋಡಿಸಿದ ಮೇಲೆಯೂ ಉಳಿದಿರಬಹುದಾದ ಸಂಶಯಗಳನ್ನು ನಿವಾರಿಸಲು ಆಧುನಿಕ ವಿಜ್ಞಾನ ಸಹಾಯಕ್ಕೆ ಬಂದಿದೆ. ಶತಮಾನಗಳ ಹಿಂದೆ ಲೆಸ್ಟರಿನ ಮಧ್ಯೆ ನೆಲಸಮವಾಗಿ ಹೂತುಹೋದ ಫ್ರಯರಿ ಚರ್ಚಿನಲ್ಲಿ ಸಿಕ್ಕ ಎಲುಬುಗಳು ರಿಚರ್ಡ್ ದೊರೆಯದೇ ಅಂತ ಹಲ್ಲಿನ ಡಿ ಎನ್ ಏ ಸಾಬೀತು ಮಾಡಿದಂತೆ ಬಾಸ್ವರ್ತ್ ಹತ್ತಿರದ ಆಳದ ಮಣ್ಣಿನ ಪೀಟ್ (peat) ಸ್ಯಾಂಪಲ್ಲುಗಳನ್ನು ಕಾರ್ಬನ್ ಡೇಟಿಂಗ್ ಮಾಡಿ ಪರೀಕ್ಷಿಸಿದ ಅಮೇರಿಕೆಯ ಲ್ಯಾಬೋರಟರಿ ಐದು ನೂರು ವರ್ಷಗಳ ಹಿಂದೆ ಇಲ್ಲಿರುವುದೇ ಜವುಳು ಪ್ರದೇಶ (marshland) ಅಂತ ಖಚಿತಪಡಿಸಿತು. ಅದರಿಂದ ರಣರಂಗದ ಸರಿಯಾದ ಜಾಗ ಇದು ಅಂತ ನಿಶ್ಚಿತವಾಯಿತು.ಇವೆಲ್ಲ ಮಾಹಿತಿ ಪಕ್ಕದಲ್ಲಿರುವ ವಿಸಿಟರ್ ಸೆಂಟರ್ ನಲ್ಲಿರುವ ಉತ್ತಮ ಮ್ಯೂಸಿಯಮ್ ದಲ್ಲಿ ದೊರಕುತ್ತವೆ.

ಕೊನೆಯ ಮಾತು

ಇತಿಹಾಸದಿಂದ ಏನು ಉಪಯೋಗ ಎಂದು ಅನೇಕರ ಅಭಿಪ್ರಾಯವಾದರೂ ಜಾರ್ಜ್ ಸಾಂಟಾಯನ ಹೇಳಿದಂತೆ ಇತಿಹಾಸವನ್ನರಿಯದವರು ಮತ್ತೆ ಮತ್ತೆ ಅವೇ ತಪ್ಪುಗಳನ್ನು ಮಾಡುವ ಶಾಪಗ್ರಸ್ತರಾಗುತ್ತಾರೆ! ಇತಿಹಾಸವನ್ನು ತುಳಿದರೆ ಅದು ನಿನ್ನನ್ನು ನೆಲಸಮಮಾಡುತ್ತದೆ! ಆದರೆ ಮಾನವ ಇತಿಹಾಸದ ತುಂಬೆಲ್ಲ ಈರ್ಷೆ, ದ್ವೇಷಗಳಿಂದ ಯುದ್ಧಗಳಾಗುತ್ತಿರುವಾಗ ಅತ್ಯಂತ ಪುರಾತನ ಉಪನಿಷತ್ತಿನ ವಾಕ್ಯ ’ಮಾ ವಿದ್ವಿಷಾವಹೈ’ (ವೈಮನಸ್ಸು, ದ್ವೇಷ ಬೇಡ) ಯನ್ನು ಯಾರೂ ಕೇಳಿಸಿಕೊಂಡಿಲ್ಲವೇ? ಎಂದೆನಿಸುತ್ತದೆ

ಶ್ರೀವತ್ಸ ದೇಸಾಯಿ.

(ಈ ವಾರದ ಕನ್ನಡಪ್ರಭದಲ್ಲಿಯ ನನ್ನ ಲೇಖನದ ವಿಸ್ತೃತ ಆವೃತ್ತಿ)

ಫೋಟೋಗಳು: ಲೇಖಕರವು; Photo of Peat: CC BY-SA 3.0, https://commons.wikimedia.org/w/index.php?curid=244694

Links: My article: https://wp.me/p4jn5J-3Sw

https://www.bosworthbattlefield.org.uk/

ಹೀಗೊಂದು ಸಿನೆಮಾ ವಿಹಾರ, ಹಾಗೊಂದು ಹರಟೆ

ಅನಿವಾಸಿ ಬಳಗಕ್ಕೆ ನಮಸ್ಕಾರ. ಯುಗಾದಿ, ರಾಮನವಮಿ, ಹನುಮಜಯಂತಿ, ಕೋಸಂಬರಿ-ಪಾನಕ, ಮಾವು ಎಂದೆಲ್ಲ ಚೈತ್ರದ ಸಂಭ್ರಮದಲ್ಲಿ ಮಿಂದೆದ್ದಿದ್ದಾಯಿತು. ಇದೀಗ ಈಸ್ಟರ್ ನ ರಜೆಯ ದಿನಗಳು. ಬೆಳಗ್ಗೆ ಮಕ್ಕಳ ಶಾಲೆಯ ಅವಸರವಿರದ, ತಡ ರಾತ್ರಿಯ ಟಿ.ವಿ. ವೀಕ್ಷಣೆಗೆ ಸೂಕ್ತ ದಿನಗಳು. ಅದಕ್ಕೆಂದೇ ನಮ್ಮ ಅನಿವಾಸಿಯ ಹೊಸ ಬರಹಗಾರರಾದ ಪ್ರಮೋದ್ ಸಾಲಿಗ್ರಾಮ ಅವರು ನೋಡಿ ವಿಶ್ಲೇಷಿಸಿದ ಸಿನೆಮಾವೊಂದರ ಲೇಖನ ಇಂದಿನ ಸಂಚಿಕೆಯಲ್ಲಿದೆ. ನಮ್ಮಲ್ಲಿರುವ ಬಹು ಮಂದಿ ಸಿನೆಮಾಪ್ರಿಯರಿಗೆ ಇದು ಮೆಚ್ಚುಗೆಯಾದೀತೆಂಬ ಭರವಸೆಯಿದೆ. ಜೊತೆಗೆ ನನ್ನದೊಂದು ಲಘು ಹರಟೆಯೂ ಉಂಟು. ಓದಿ ಲಗೂನೆ ಒಂದೆರಡು ಕಮೆಂಟೂ ಮಾಡ್ರಿ. ಹಂಗೇ ಪ್ರಮೋದ್ ಅವರು ಹೇಳಿದ ಸಿನೆಮಾನೂ ನೋಡ್ರಿ..ಅವರ ಅನಿಸಿಕೆಗಳ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಗಳನ್ನೂ ಹಂಚಗೊಳ್ರಿ. – ಸಂಪಾದಕಿ

ನಾ ಕಂಡ ವಿಡುದಲೈ – ೧

ಬರಹಗಾರ ಜೆಯಮೋಹನ್ ರವರ ಸಣ್ಣಕಥೆ ಆಧಾರಿತ ಸಿನಿಮಾ. ಮೈನಿಂಗ್ ಹೆಸರಲ್ಲಿ ಸರ್ಕಾರವೊಂದು  ಜನರಿಗೆ ಮಣ್ಣೆರಚುತ್ತಾ : ಕ್ರಾಂತಿಕಾರಿಯೋರ್ವನನ್ನು ದೇಶದ್ರೋಹಿಯಾಗಿಸಿ ; ಪೊಲೀಸ್ ಪಡೆಯೊಂದು ಅವನ ಬೆನ್ನಟ್ಟಿರುವ ಹಿನ್ನಲೆಯಲ್ಲಿ ಈ ಚಿತ್ರ . 

ಪೊಲೀಸ್ ದೌರ್ಜನ್ಯದ ಮುನ್ನಲೆಯಲ್ಲಿ ಡ್ರಾಮಾ ರಚಿಸಿ , ಕಥಾಪಾತ್ರಗಳೆಲ್ಲ ಬಂದು ಕಥೆಗೆ ನಟಿಸಿ ಹೋಗುತ್ತಾರೆ ಅಷ್ಟೇ. ಕಥೆಯೇ ಸಿನಿಮಾದ ಜೀವಾಳ . ಇದು ನಿರ್ದೇಶಕ ವೆಟ್ರಿಮಾರನ್ ಗೆ ಹೊಸದಲ್ಲ- ಅವರ ಹಿಂದಿನ ಸಿನಿಮಾ : ವಿಸಾರಣೈ ಒಂದೊಮ್ಮೆ ನೋಡಿ ಬನ್ನಿ . ಇವರು ಪಾತ್ರಗಳ ನಿಟ್ಟಿನಲ್ಲಿ ಕಥೆ ಹೇಳುವ ಕಲೆಯನ್ನ ,ಹೇಗೆ ಕರಗತ ಮಾಡಿಕೊಂಡ್ದಿದಾರೆ ಅನ್ನೋ ಆಶ್ಚರ್ಯ ನಿಮ್ಮನ್ನ ಪಕ್ಕಾ ಕಾಡುತ್ತದೆ .  ಗುಡ್ಡುಗಾಡಿನ ಗ್ರಾಮಸ್ಥರು , ಪೋಲಿಸಿನವರು , ರಾಜಕಾರಣಿ , ಮಾಧ್ಯಮದವರು, ನಾಯಕ -ನಾಯಕಿ ಎಲ್ಲರ ಮಧ್ಯದಲ್ಲೊಂದು balancing act ನಿರ್ದೇಶಕನ ಕೈಚಳಕ . ಮೊದಲ ಹತ್ತು ನಿಮಿಷದ ರೈಲು ಆಕ್ಸಿಡೆಂಟ್ ದೃಶ್ಯದಲ್ಲೇ ದೊಡ್ಡ Long -Shot  ಮುಖಾಂತರ ಕ್ಯಾಮೆರಾ ಕಣ್ಣಲ್ಲಿ ಟ್ರೈನ್ ಕಿಟಕಿಯೊ ಳಗೆ ಹೊಕ್ಕು ಗಾಯಗಳು , ಸಾವು ನೋವು , ವೇದನೆ , ಅನುಕಂಪ , ಮನುಷ್ಯತ್ವ ಎಲ್ಲವನ್ನುತೋರಿಸುತ್ತ ಕಥೆಯಲ್ಲಿ ಮುಳಿಗಿಸಿಬಿಡುತ್ತಾರೆ . ನಂತರ ಬರುವುದೆಲ್ಲಾ Bonus.  

ದಮನಿತರ ರಕ್ಷಣೆಗೆ ನಿಂತಂತೆ ಇರುವ ಕ್ರಾಂತಿಕಾರಿ ಪೆರುಮಾಳ್ ವಾದಿಯಾರ್ (ವಿಜಯ್ ಸೇತುಪತಿ)ಗೆ ಭಾಗ ಒಂದರಲ್ಲಿ ಕಡಿಮೆ ಪಾತ್ರ ಆದರೂ ಮನಸ್ಸಿಗೆ ಹತ್ತಿರವಾಗುತ್ತಾರೆ . Climax ನಲ್ಲಿ ಬರುವ ಅವರ ಭಾಗ -೨ರ ತುಣುಕುಗಳಲ್ಲಿ powerful Dialogue ನಿಂದ ಮುಂದೇನಾಗಬಹುದು ಅನ್ನೋ ಕುತೂಹಲ.  

ಪೊಲೀಸ್ ಇಲಾಖೆಯ ಸಾಮಾನ್ಯ ಪೇದೆ ಕುಮರೇಸನ್(ಸೂರಿ) ಈ ಕಥೆಯ ಮುಖ್ಯ ಪಾತ್ರಧಾರಿ .ಈ ಮುನ್ನ ಬರೀ comedian ಆಗೇ ನಟಿಸಿದಂತ ಸೂರಿ ಅವರನ್ನ ಸಿನಿಮಾದ ಹೀರೋವನ್ನಾಗಿಸಿರುವ ನಿರ್ದೇಶಕರ ಗಟ್ಟಿ ನಿರ್ಧಾರ ಮೆಚ್ಚಬೇಕಾದಂತದ್ದು . ಕಾರಣ ಪಾತ್ರಕ್ಕೆ ಬೇಕಾದ ಮುಗ್ಧತೆ , ಅಸಹಾಯಕತೆ , ಹತಾಶೆ ಇವೆಲ್ಲದರ ಮಧ್ಯೆ ನೈತಿಕತೆಯ ಮೂರ್ತರೂಪ ಸೂರಿ . ತಾನು ತಪ್ಪು ಮಾಡದೆ ಇದ್ದಾಗ ಕ್ಷಮೆ ಕೇಳಲಿಚ್ಛಿಸದ ಛಲವಾದಿ -  ಮನಸ್ಸಿಗೆ ಹತ್ತಿರವಾಗುತ್ತಾರೆ . ನಮ್ಮ - ನಿಮ್ಮಂತೆ ವ್ಯವಸ್ಥೆಯ ಮೇಲೆ ಭರವಸೆ ಇಟ್ಟಿರುವ ಕುಮರೇಸ ವಿನಾಕಾರಣ ಪನಿಶ್ಮೆಂಟ್ ತಿನ್ನುವಾಗ ಕರುಳು ಚುರುಕ್ ಅನ್ನತ್ತೆ.  ಕುಮರೇಸ- ನಾವೇ ಏನೋ ಅನ್ನಿಸೋ ಅಷ್ಟು ಆಕ್ರಮಿಸುತ್ತಾರೆ , ಪ್ರಭಾವ ಬೀರುತ್ತಾರೆ. 

ನಾಯಕಿ ತಮಿಳರಸಿಯಾಗಿ (ಭವಾನಿ ಶ್ರೀ) ನಿಮ್ಮನ್ನು ದಿಗ್ಭ್ರಮೆಗೊಳಿಸುತ್ತಾರೆ. ಪರದೆಯ ಮೇಲಿನ ಲವ್ ಟ್ರ್ಯಾಕ್ ನಮ್ಮನ್ನು ಎಲ್ಲೂ ಬೋರ್ ಹೊಡಿಸದಂತೆ ಸಮಗ್ರವಾಗಿ ಮತ್ತು ಅದ್ಭುತವಾಗಿ ಬರೆಯಲಾಗಿದೆ.ಅದಕ್ಕೆ ಕಾರಣ ನಾಯಕಿಯ ಭಾವನಾತ್ಮಕ ಆಘಾತಗಳು , ಜನಾಂಗದ ಹಿನ್ನೆಲೆ, ಫ್ಲ್ಯಾಷ್‌ಬ್ಯಾಕ್ ಎಲ್ಲವೂ ಕಥೆಗೆ ಪೂರಕವಾಗಿರೊದು. ತುಂಬಾ ಹಿಡಿಸುವ scene ಒಂದು ನೆನಪಿಗೆ  ಬರುತ್ತಿದೆ : ಸರಿಯಾಗಿ ಸ್ಪಂದಿಸದ ಕಾರಣ ನಾಯಕಿಯ ಎದುರು ಕುಮರೇಸ ಬಂದು ಬೇಷರತ್ ಕ್ಷಮೆಯಾಚಿಸಿ , ತಪ್ಪನ್ನು ಸಮರ್ಥಿಸಿಕೊಳ್ಳದೆ , ಏನನ್ನೂ ವೈಭವೀಕರಿಸದಿರುವ scene - ತುಂಬಾ Beautiful ಹಾಗೂ Rare ಕೂಡ . 

ಕುಮರೇಸನಿಗೆ ನರಕ ತೋರಿಸುವ ವ್ಯವಸ್ಥೆಯ ರೂವಾರಿಯಾಗಿ ಪೊಲೀಸ್ ಅಧಿಕಾರಿ ಓ.ಸಿ (ಚೇತನ್). ಈತ ಚಿತ್ರದ ದೊಡ್ಡ ಅಚ್ಚರಿ. ಪೋಲೀಸರ ದೌರ್ಜನ್ಯದ ಮುಖವಾಗಿ ಮತ್ತು ಕ್ರೂರಿಯಾಗಿ ಪಾತ್ರವನ್ನು ನೆನಪಿನಲ್ಲಿರುವಂತೆ ನಟಿಸಿದ್ದಾರೆ. DSP ಯಾಗಿ ಗೌತಮ್ ವಾಸುದೇವ್ ಮೆನನ್ , Chief Secretary ಆಗಿ ರಾಜೀವ್ ಮೆನನ್ Perfect . ಸಣ್ಣ ಪೋಷಕ ಪಾತ್ರಗಳು ಕೂಡ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.   

ಹೊರಗಿನವನು ಹೇಗೆ ಒಳಗಿನವನಾಗುತ್ತಾನೆ ? ನಿರಪರಾಧಿ ಹೇಗೆ ನಿಜಾಯಿತಿ ಅರಿಯುತ್ತಾನೆ ? ಸತ್ಯದಿಂದ ದೂರವಾದ ಮಾಧ್ಯಮಗಳ ಪ್ರಚಾರ , ವ್ಯವಸ್ಥಿತ ರಾಜಕೀಯ, ಮೇಲ್ದರ್ಜೆಯವರ ದರ್ಪ - ಪೊಲೀಸರನ್ನು ಹೊಕ್ಕಿದಾಗ ಜನರಿಗಾಗುವ ಸಂಕಷ್ಟಗಳು ,ಒಳ್ಳೆಯದಾವುದು - ಕೆಟ್ಟದಾವುದು ಎಂಬ ಸಂಘರ್ಷ. ಯಾರ ಪರವಾಗಿ ಹೋರಾಡುವುದು ? ಹೀಗೆ ನಾನಾ ವಿಷಯಗಳನ್ನು ಅವರವರ ದೃಷ್ಟಿಕೋನದಲ್ಲಿ ಹೇಳಿರುವ ಕಥೆ ತೆರೆಯ ಮೇಲೆ ಸ್ಪಷ್ಠವಾಗಿ ಕಾಣಸಿಗುತ್ತದೆ . ಹಾಗಾಗಿ ನಾವು ಕೂಡ ಬರೀ ಪ್ರೇಕ್ಷಕರೆನ್ನುವುದು ಮರೆತು ಹೋಗಿ ಪಾತ್ರಗಳಾಗಿರುತ್ತೇವೆ . 

ಪೊಲೀಸ್ ದೌರ್ಜನ್ಯ, Raw ಅಂಡ್ Rustic ಆಗಿ ಮೂಡಿಬರಬೇಕು ಅಂತ ಚಿತ್ರದಲ್ಲಿ ಸಾಕಷ್ಟು Aggression, Nudity, Vulgarity ಎಲ್ಲವೂ ಇದ್ದು disturb ಆಗಿಬಿಡಬಹುದು . ಹಾಗೂ ಚಿತ್ರದಲ್ಲಿ  ಅಲ್ಲಲ್ಲಿ ಡಬ್ಬಿಂಗ್ lip Sync issues ಅನ್ನಿಸ್ತು.  

ಕ್ಯಾಮೆರಾ ವರ್ಕ್ ವೇಲರಾಜ್ , ಕಲಾ ನಿರ್ದೇಶನ  Jackie, ಎಡಿಟರ್ ರಾಮರ್  ನಿಮಗೆ ದೊಡ್ಡ ಸಲಾಂ .ಇಳಯರಾಜರ ಇಂಪಾದ ಸಂಗೀತವಿದೆ. ಹಾಡೊಂದಕ್ಕೆ ಕನ್ನಡತಿ ಅನನ್ಯ ಭಟ್ ದನಿಯಿದೆ. ಸಿನಿಮಾದ geography  - locations ಎಲ್ಲವೂ ಕಥೆಗೆ ಪೂರಕ .  ಸಿನಿಮಾನೇ ಜೀವನ ಅಂತ ಇಷ್ಟಪಡುವ ಹಲವು ಜನರ ಕೈಂಕರ್ಯದ ಫಲ ವಿಡುದಲೈ  . ಪೊಲೀಸ್ ದೌರ್ಜನ್ಯದ ದೃಶ್ಯಗಳು ಬಲು ಹಿಂಸಾತ್ಮಕ - ಸ್ವತಃ ಪೊಲೀಸ್ ಒಬ್ಬಾತನಿಗೂ ತನ್ನ ಕೆಲಸದ ಮೇಲೆ ವಿಷಾದ ಮೂಡಬಹುದು . ಆದರೂ ಸಹ ಸಮುದಾಯದ ತಳವರ್ಗ / ಬುಡಕಟ್ಟು ಜನರ ಕಷ್ಟ-ಕಾರ್ಪಣ್ಯ ಗಳಿಗೆ ಕನ್ನಡಿ . ಮನಸ್ಸು ಕರಗಿ , ನಮ್ಮನು ನಾವೇ ಅರ್ಥೈಸಿಕೊಳ್ಳಬಹುದಾದ ಪ್ರಶ್ನೆಗಳು ಮೂಡುತ್ತವೆ. ಅದಕ್ಕೆ ಏನೋ  ಈ ಸಿನೆಮಾಗೆ ವಿಡುದಲೈ ಅಂದರೆ ಬಿಡುಗಡೆ/ಸ್ವಾತಂತ್ರ್ಯ ಅನ್ನೋ ಹೆಸರು. 

Rating: ೮೫/೧೦೦

-ಪ್ರಮೋದ್ ಸಾಲಿಗ್ರಾಮ ರಾಮಕೃಷ್ಣ

ಪಂಜಾದ ಮ್ಯಾಲೊಂದು ಪ್ರಬಂಧ

ಸ್ನೇಹಿತರೇ ನಮಸ್ಕಾರ.’ಪಂಜಾನs' ಅಂತ ಒಮ್ಮಿಗಲೇ ಆವಾಕ್ಕಾಗಬ್ಯಾಡ್ರಿ.ಈ ಪಂಜಾ ಹುಲಿ-ಸಿಂಹದ ಪಂಜಾ ಅಲ್ರಿ .  ಮತ್ತ ನಮ್ಮ ಬೆಂಗಳೂರು -ಮೈಸೂರಿನ
ಪಂಚೆನೂ ಅಲ್ರಿ.ಯಾಕಂದ್ರ ಆ ಪಂಚೆಯ ಠೀವಿ  ಬ್ಯಾರೆನೇ ಇರತದ.ಕೆಂಪು-ಹಸಿರು ಬಣ್ಣದ ಎರಡು  ಬಟ್ಟಿನ ಜರದ ಅಂಚೇನು? ಬೆಳ್ಳಗ ಶುಭ್ರ ಕೊಕ್ಕರೆಯಂಥ ಅದರ ಮಿನುಗೇನು?......ಅದಲ್ಲ ತಗೀರಿ,ಇದು ನಮ್ಮ ಉತ್ತರ ಕನಾ೯ಟಕದ ಪಂಜಾsರೀ..

ಜೀವನದಾಗ ಒಂದು ಗುರಿ ಇರಬೇಕು ;ಕೆಲವೊಂದು ರೂಲ್ಸ್ ,ಕಂಡೀಷನ್ಸ ಇರಬೇಕು  ಅನ್ನೋದು ಬಲ್ಲವರ ಮಾತು.ನಮ್ಮ ಡಿ.ವಿ.ಜಿ.ಯವರಂತೂ”ಜೀವಗತಿಗೊಂದು ರೇಖಾಲೇಖವಿರಬೇಕು  ನಾವಿಕನಿಗೆ ಇರುವಂತೆ  ದಿಕ್ಕು  ದಿನವೆಣಿಸೆ’ ಅಂತ ಖಡಾಖಂಡಿತವಾಗೇ ಹೇಳಿಬಿಟ್ಟಾರ.ಆದ್ರ ನಮ್ಮ ಈ ಕೈಮಗ್ಗದ , ಖಾದಿಭಂಡಾರದ ಪಂಜಾಕ್ಕ ಇವು ಯಾವ ಮಾತೂ ಅಪ್ಲೈ
ಆಗಂಗಿಲ್ಲ.ಅದಕ್ಯಾವ ಘನಂದಾರಿ ಗೊತ್ತು ಗುರಿ ಏನೂ ಇಲ್ಲ.ಅದರಲೆ ತಲಿ ಅರೆ  ಒರಸಕೋರಿ, ಮಾರಿ ಅರೆ ಒರಸಕೋರಿ ,ಮುಸುರಿಗೈ ಅರೆ ಒರಸಕೋರಿ, ಅಳ್ಳಕ ಆಗಿದ್ದ ಹೂರಣ ಅರೆ ಸೋಸರಿ,ಅನ್ನದ ಗಂಜಿ ಬಸೀರಿ,ಶ್ರೀಖಂಡಕ್ಕ ಮಸರರೆ ಕಟ್ರಿ, ಮೊಳಕಿ ಬರಸಲಿಕ್ಕೆ ಕಾಳ ಅರೆ ಕಟ್ಟಿಡ್ರಿ, ದೇವರ ಒರಸೂ ವಸ್ತ್ರ ಮಾಡ್ರಿ,ಮಡೀಲೆ ಒಣಗಹಾಕಿ ದೇವರ ಪೂಜಾ ಅರೇ ಮಾಡ್ರಿ ..ಇಲ್ಲಾ  ಶ್ರಾದ್ಧ-ಪಕ್ಷ -ತಿಥಿ ಮಾಡ್ರಿ..  ಎಲ್ಲಾ ನಡೀತದ.ಫಲಾಫಲದ ಚಿಂತೆಯಿಲ್ಲದ ಕಮ೯ಯೋಗಿಯಂತೆ ಯಾವ ಕೆಲಸವನ್ನಾದರೂ ನಿಷ್ಠೆಯಿಂದ  ಮಾಡುವ ಹಿರಿಮೆ ಇದರದು.ನಾ ಮೊದಲೇ ಹೇಳಿದ್ಹಂಗ ಇದು ಯಾವ ನಿಯಮಗಳ ಮುಲಾಜಿಲ್ಲದ ಸವ೯ತಂತ್ರ ಸ್ವತಂತ್ರ ವಾದದ್ದು.ಅದಕ್ಕ ಯಾವದೇ ಪಂಜಾದ ಮ್ಯಾಲೂ ‘ವಾಶಿಂಗ್ ಇನ್ ಸ್ಟ್ರಕ್ಶನ್ಸ’ ಇರಂಗಿಲ್ಲ ನೋಡ್ರಿ.”only hand wash,only dry clean ,keep away from the fire,only machine wash in 40 degree ,do not iron ..ಇಂಥ ಯಾವ  ರಗಳೇನೂ ಇಲ್ಲ.ಕೈಲೇರೆ ಒಗೀರಿ,ಮಶೀನ್ ನಾಗರೆ ಹಾಕ್ರಿ,ಅಗಸರವನಿಗೇ ಕೊಡ್ರಿ...ಎಲ್ಲಾನೂ ನಡೀತದ.ಇದ್ರ ಒಂಚೂರು ನಿರಮಾನೋ,ನೀಲಿಪಾಲಿನೋ ಹಾಕಿದರೂ ನಡದೀತು! ಇಲ್ಲಂದ್ರ ಬರೀ ನೀರಲ್ಲಿ ಕೈಯಿಂದ ಕುಕ್ಕಿ ಹಾಕಿದರೂ ಆಯಿತು.ಬಿಚ್ಚಿ ಹರವಿದ್ರ ಐದು ನಿಮಿಷದಾಗ ಒಣಗೇ ಬಿಡತದ. ಇಸ್ತ್ರಿ ಪಸ್ತ್ರಿ ಮಾಡೂ ತಂಟೆನೂ  ಇಲ್ಲ.
ಇನ್ನು ಇವುಗಳ ಸೈಜೋ? ದಶಾವತಾರದ ವಾಮನನಿಂದ ಹಿಡಿದು ತ್ರಿವಿಕ್ರಮನವರೆಗೆ..ಅಂಗೈ ಅಗಲದಿಂದ ಹಿಡಿದು ನವ್ವಾರಿ ಸೀರಿಯಷ್ಟು ದೊಡ್ಡದೂ ಸಿಗತಾವ.ಕನಾ೯ಟಕ ಬಿಟ್ಟು ಸುಮಾರು ೨೫ ವಷ೯ಗಳಿಂದ ದೆಹಲಿ – ಲಂಡನ್ ಅಂತ ಎಲ್ಲೇ ಅಡ್ಡಾಡಿದರೂ ನಮ್ಮ ಮನೆಯ  ಕಪಾಟಿನಾಗ ಪಂಜಾಕ್ಕೊಂದು ಜಾಗ ರಿಸವ್೯ ಇರೂದಂತೂ ಗ್ಯಾರಂಟಿ .ನಾನು ಪ್ರತಿಸಲ ಸೂಟಿಗೆ  ಅಂತ ನನ್ನ ತವರು  ಮನಿಗೆ ಹೋದ್ರ  ಏನು ಬಿಟ್ಟರೂ ,ಬ್ಯಾರೆ ಬ್ಯಾರೆ ಸೈಜಿನ  ನಾಲ್ಕು ಪಂಜಾ ತರೂದಂತೂ ತಪ್ಪಸಂಗಿಲ್ರಿ.ಎರಕೊಂಡ ಮ್ಯಾಲೆ ಪಂಜಾದಲೆ ತಲಿ ಒರಸಿಕೊಳ್ಳುದರ ಮಜಾನೇ ಬ್ಯಾರೆ.soft ಆದ  cotton ಬಟ್ಟಿ...ಸಂಪೂಣ೯ವಾಗಿ ನೀರು ಹೀರಿಕೊಳ್ಳುವ  ಅದರ ವೈಶಿಷ್ಟ್ಯ.. ಈ  ಟರ್ಕಿ - ಪರ್ಕಿ ಒಳಗ ಆ ಮಜಾ ಇಲ್ಲ ಬಿಡ್ರಿ.
 ನಾವು ಸಣ್ಣವರಿದ್ದಾಗ ನಮ್ಮ ಸೋದರಮಾವ  ಚ್ಯಾಷ್ಟಿ ಮಾಡತಿದ್ರು...”ನೈನಂ ಛಿಂದಂತಿ ಶಸ್ತ್ರಾಣಿ  ನೈನಂ ದಹತಿ ಪಾವಕ: “ ಅಂತ ಶ್ರೀಕೃಷ್ಣಗ ಭಗವದ್ಗೀತಾ ಒಳಗ ಆತ್ಮದ ಲಕ್ಷಣ ಹೇಳೂ ಐಡಿಯಾ ನಮ್ಮ ಸುಬ್ಬಣ್ಣಾಚಾರ್ಯರ ಪಂಜಾ ನೋಡಿನೇ ಬಂದಿರಬೇಕು ಅಂತ.ಹಂಗs  ಅವಾಗಿನ ಅಂದ್ರ 60- 70 ರ ದಶಕದ ಸುಬ್ಬಣಾಚಾಯ೯ರಿಂದ ಈಗ  2022-23 ರ ನಮ್ಮ ಪವಮಾನಚಾರ್ಯರತನಕ ಇದರ ಜಾಗ ಏನೂ ಬದಲಾಗಿಲ್ಲ. ನಮ್ಮ ಪವಮಾನಾಚಾರ್ಯರು  face-book,WhatsApp  ಎಲ್ಲಾದರಾಗೂ ಇದ್ದಾರ.ಕಂಪ್ಯೂಟರ್ ನಾಗ ಕುಂಡಲಿ  ತಗೀತಾರ.ವಿಮಾನದಾಗ ಓಡಾಡತಾರ.ಆದ್ರ ಪಂಜಾದ ಜಾಗಾದಾಗ ಮಾತ್ರ ಇನ್ನೊಂದು  ಸಾಮಾನು ಬಂದಿಲ್ಲ ನೋಡ್ರಿ.ಇವುಗಳದು ತಲೆ-ತಲಾಂತರದಿಂದ ಒಂಥರಾ ‘ಏಕಮೇವ ಚಕ್ರಾಧಿಪತ್ಯ’.  ‘ಸೂಯ೯ನ ಕಾಂತಿಗೆ ಸೂಯ೯ನೇ ಸಾಟಿ  .ಹೋಲಿಸಲಾರಿಲ್ಲ.’ ಅಂದ್ಹಂಗ ಪಂಜಾದ ಹಿರಿಮೆಗೆ ಪಂಜಾನೇ ಸಾಟಿ .ಹೋಲಿಸಲಾರಿಲ್ಲ.’ಮಡಿವಾಳರ ಶತ್ರು ,ಮಠದಯ್ಯಗಳ ಮಿತ್ರ....ಲಂಗೋಟಿ ಬಲು ಒಳ್ಳೇದಣ್ಣ  - ಒಬ್ರ ಹಂಗಿಲ್ಲದೇ ಮಡಿಗೆ ಒದಗುವುದಣ್ಣ ‘ ಅಂತ ಪುರಂದರದಾಸರು ಹಾಡಿದರಲ್ಲ.....ನಾವು ಬೇಕಾದರ ಲಂಗೋಟಿಗೆ ಪಯಾ೯ಯವಾಗಿ ಪಂಜಾ ಬಳಸಿಕೊಂಡ್ರ ಏನೂ ತಪ್ಪಿಲ್ಲವೇನೋ?! ಈ ಪಂಜಾಗಳಿಗೆ ರೇಶ್ಮೆಯಂಥಾ ರೇಶ್ಮೆಯಿಂದನೂ ಕಾಂಪಿಟೇಶನ್ ಇಲ್ಲ ಬಿಡ್ರಿ.

ಬ್ರಾಹ್ಮಣರ  ಮನ್ಯಾಗ ಏನು ಇಲ್ಲಂದ್ರೂ ನಡೀತದ.ಆದ್ರ ಈ ಪಂಜಾ ಇಲ್ಲಂದ್ರ ನಡ್ಯಂಗಿಲ್ಲ ನೋಡ್ರಿ.ದೇವರ  ಪೂಜಾದ ಸಮಯಕ್ಕ ಉಪಯೋಗಿಸಿದಂಥ ಪಂಜಾನ್ನ ಆಮ್ಯಾಲೆ ಬಿಚ್ಚಿ ನೋಡಬೇಕ್ರಿ..ಅದರ ಮ್ಯಾಲೆ ಒಂದು  ಸುಂದರ ವಣ೯ಚಿತ್ರ , ಒಂದು  modern art ಆಗಿಬಿಟ್ಟಿರತದ.ಅಕ್ಷಂತಿ,ಗಂಧ,ಅರಿಶಿನ,ಕುಂಕುಮ ಎಲ್ಲದರ ಸುಂದರ ಚಿತ್ತಾರ...ಇನ್ನ ದೊಡ್ಡ  ದೊಡ್ಡ  ಸಮಾರಾಧನಿ ಅಡಿಗಿಗೆ ಪಂಜಾ ಬೇಕೇ ಬೇಕ್ರಿ.ದೊಡ್ಡ  ದೊಡ್ಡ ಪಾತೇಲಿ ಒಲಿ ಮ್ಯಾಲಿಂದ ಇಳಸಲಿಕ್ಕೆ ಒದ್ದಿ ಪಂಜಾನೇ ಬೇಕ್ರಿ.ಹಾಂ,ಮಸಾಲಿಪುಡಿ,ಖಾರಪುಡಿ ,ಅರಿಶಿನ ಪುಡಿ ಎಲ್ಲಾ ಮೆತ್ತಿದ ಅದರ ಸೌಂದರ್ಯನೇ ಬ್ಯಾರೆ. ಇಷ್ಟ ಯಾಕ್ರಿ ಸ್ವಾಮಿಗೋಳು ಮುದ್ರಾ ಹಾಕಬೇಕಂದ್ರೂ ಈ ಪಂಜಾ ಜೋಡಿಗೆ ಬರಬೇಕ್ರಿ.ಒದ್ದಿ ಪಂಜಾದ ಮ್ಯಾಲೆ ಮುದ್ರಿ ಒತ್ತಿದ ಮ್ಯಾಲೆನೇ ಅದು ನಮ್ಮ ಮೈ ಮ್ಯಾಲೆ ಮೂಡೂದರಿ.
ನಮ್ಮ ಗದಗಿನ ಕುಮಾರ ವ್ಯಾಸನ ಭಾರತಕ್ಕೂ ಇದು ತನ್ನ ಕೊಡುಗೆ ಸಲ್ಲಿಸಿದ್ದ ಗೊತ್ತಿರಬೇಕ ನಿಮಗ. ಬಾವಿ ನೀರಿನ ಸ್ನಾನಮಾಡಿ ಉಟಗೊಂಡಿದ್ದ ಒದ್ದಿ ಪಂಜಾ ಆರೂತನಾ ಕುಮಾರವ್ಯಾಸಗ ಕಾವ್ಯ ಸ್ಫೂರ್ತಿ ಇರತಿತ್ತು ಅಂತಲೂ, ಕಂಬಕ್ಕೆ ಆರಲೆಂದು ಕಟ್ಟಿದ ಪಂಜಾದ ಮ್ಯಾಲ ನಾರಾಣಪ್ಪಗ ಮಹಾಭಾರತ ಸಚಿತ್ರವಾಗಿ ಕಾಣಿಸುತ್ತಿತ್ತು ಅಂತಲೂ ದಂತಕಥೆಗಳು ಪ್ರಚಲಿತದಾಗ ಅವ. 
ಹಂಗಂತ ಇದರ ಜಾಗಾ ಬರೇ ಬಡ ಬ್ರಾಹ್ಮಣರ ಮನ್ಯಾಗ ಮತ್ತ ಮಠದಾಗಷ್ಟೇ ಅಂತ ತಿಳಕೋಬ್ಯಾಡ್ರಪಾ.ಇದು ರಗಡ ಸಲ ಬಾಲಿವುಡ್ ಸವಾರಿನೂ ಮಾಡಿ  ಬಂದದ.ನಮ್ಮ ರಾಜಕಪೂರ್ ಫ್ಯಾಮಿಲಿಯವರಿಗಂತೂ ಇದು ಫೇವರಿಟ್. ‘ ತುಝೆ ಬುಲಾಯೆ ಯೆ ಮೇರಿ ಬಾಹೇಂ...ಗಂಗಾ  ಯೆ ತೇರಿ ಹೈ ಫಿರ್ ಕೈಸಿ ದೇರಿ ಹೈ’ಅಂತಲೂ, ‘ಸತ್ಯಂ ಶಿವಂ ಸುಂದರಂ ‘ ಅಂತಲೂ ಹಾಡಿ ತಾನೂ ಕುಣಿಯೂದಲ್ಲದ ಎಲ್ಲಾರ ಮೈ-ಮನಸ್ಸನ್ನೂ ಕುಣಿಸಿ -ತಣಿಸೇದ ಅನ್ನೂದನ್ನ ಮರೀಬ್ಯಾಡ್ರಿ.
ಇಷ್ಟೆಲ್ಲಾ  ಆದ್ರೂ ಸೊಕ್ಕಿಲ್ಲ ನೋಡ್ರಿ ಅದಕ್ಕ.”ತುಂಬಿದ ಕೊಡ ತುಳಕಂಗಿಲ್ಲ “ಅನ್ನೂಹಂಗ ಸದ್ದಿರದೇ ತನ್ನ ಕತ೯ವ್ಯದಲ್ಲಿ ನಿರತವಾಗಿರತದ.ಫಲಾಫಲಾಪೇಕ್ಷೆಯಿಲ್ಲದೇ ,ಮೇಲು -ಕೀಳು ಎನ್ನದೇ ಕಮ೯ಯೋಗಿಯಂತೆ ತಾನಾಯಿತು ತನ್ನ ಕಾಯಕವಾಯಿತು ಎಂಬಂತಿರತದ.

ಮತ್ತ ಇಂಥ ಪಂಜಾಕ್ಕ  ಒಂದು ಮೆಚ್ಚುಗಿ ಮಾತ ಬರಲೆಲಾ ನಿಮ್ಮ ಕಡೆಯಿಂದ.

- ಗೌರಿ ಪ್ರಸನ್ನ