ಕವನ ಗುಚ್ಛ: ವಿ.ಕೆ. ಭಗವತಿ ಹಾಗೂ ಅಮರಪ್ರೇಮ (ಭಾಗ-೨): ಕೇಶವ ಕುಲಕರ್ಣಿ

ಅನಿವಾಸಿ ಸತತವಾಗಿ ಇಂದು ತನ್ನ ಐನೂರನೇ ಸಂಚಿಕೆಯನ್ನು ಪ್ರಕಟಿಸುತ್ತಿದೆ. ನಮ್ಮೆಲ್ಲರಿಗೂ ಇದು ಹೆಮ್ಮೆಯ, ಸಂತೋಷದ ವಿಷಯ. ಈ ಸಾಧನೆಯ ಹಿಂದೆ ಅನಿವಾಸಿ ಸದಸ್ಯರ ಅವಿರತ ಶ್ರಮವಿದೆ, ಕಣ್ಣೀರಿದೆ, ಕಕ್ಕುಲತೆಯಿದೆ, ಕನ್ನಡ ನಾಡಿನ – ಭಾಷೆಯ ಮೇಲಿನ ಅಪಾರ ಪ್ರೇಮವಿದೆ.

ತಾಯ್ನಾಡಿನ ಕೊಂಡಿಯನ್ನು ಪ್ರತಿನಿಧಿಸುತ್ತಿರುವವರು ಅತಿಥಿ ಕವಿ ಡಾ. ವಿ.ಕೆ. ಭಗವತಿ. ವಿಕೆಬಿ, ವೃತ್ತಿಯಲ್ಲಿ ವೈದ್ಯರು. ಈಗಿನ ಗದಗ ಜಿಲ್ಲೆಯಲ್ಲಿರುವ ರೋಣ ತಾಲೂಕಿನ ಲಕ್ಕಲಕಟ್ಟಿಯಲ್ಲಿ ಹುಟ್ಟಿ, ಹುಬ್ಬಳ್ಳಿಯ ಕೆ ಎಂ ಸಿ ಯಲ್ಲಿ ಸ್ನಾತಕ, ಸ್ನಾತಕೋತ್ತರ ಪದವಿ ಪಡೆದು, ಹಾವೇರಿಯಲ್ಲಿ ವೃತ್ತಿ ನಿರತರಾಗಿದ್ದರು. ಮೊದಲಿನಿಂದಲೂ ಸಾಹಿತ್ಯ, ನಾಟಕ, ಸಂಗೀತ ಹಾಗು ಸುತ್ತುವ ಹವ್ಯಾಸವಿರುವ ವಿಕೆಬಿ, ಕನ್ನಡ ಹಾಗೂ ಉರ್ದುಗಳಲ್ಲಿ ಕವನ, ಗಝಲ್ ಗಳನ್ನ ರಚಿಸಿದ್ದಾರೆ. ವೃತ್ತಿಯಿಂದ ನಿವೃತ್ತರಾದಮೇಲೆ, ದೇಶ ವಿದೇಶಗಳ ಪ್ರವಾಸ ಮುಗಿಸಿ, ಶಿರಸಿಯ ಹತ್ತಿರದ ಹಳ್ಳಿಯೊಂದರಲ್ಲಿ ಕೃಷಿಯನ್ನು ಪ್ರವೃತ್ತಿಯನ್ನಾಗಿಸಿಕೊಂಡು ಜೀವನದ ಎರಡನೇ ಇನ್ನಿಂಗ್ಸ್ ಆಡುತ್ತಿದ್ದಾರೆ. ರೈತ ಮನೆತನದಲ್ಲಿ ಹುಟ್ಟಿದ ವಿಕೆಬಿ ಅವರ ಕವನಗಳಲ್ಲಿ ಮಣ್ಣಿನ ಸಾಮೀಪ್ಯತೆಯ ಅರಿವಾಗುತ್ತದೆ. ಅವರ ವಿಭಿನ್ನ ರೀತಿಯ ಪದಗಳ ಬಳಕೆ; ಗಝಲ್ ಶೈಲಿ ನಿಮ್ಮ ಗಮನಕ್ಕೆ ಬರಬಹುದು ಈ ಮೂರು ಕವನಗಳಲ್ಲಿ.

ಐನೂರನೇ ಸಂಚಿಕೆಯ ಇಂಗ್ಲೆಂಡಿನ ಪ್ರತಿನಿಧಿಯಾಗಿ ಎರಡನೇ ಭಾಗದಲ್ಲಿ ಓದುಗರು ಕಾತುರದಿಂದ ಕಾದಿರುವ ಕೇಶವ್ ಬರೆದಿರುವ ‘ಅಮರ ಪ್ರೇಮ’ ಕಥೆಯ ಮುಂದಿನ ಕಂತಿದೆ. ಅಮರನ ‘ಪ್ರೇಮ’ ಸಿಕ್ಕಳೇ? ಆತನ ಪ್ರೇಮ ಗಗನ ಕುಸುಮವಾಗಿಯೇ ಉಳಿಯಿತೇ? ನಿಮ್ಮ ಪ್ರಶ್ನೆಗಳಿಗೆ ಉತ್ತರ ಸಿಕ್ಕೀತೇ ಯಾ ಕೇಶವ್ ಇನ್ನೂ ನಿಮ್ಮನ್ನು ಕೌತುಕದ ಸುಳಿಯಲ್ಲಿ ಸಿಕ್ಕಿಸಿ ಒದ್ದಾಡಿಸುವರೇ? – ರಾಂ

ವಿ ಕೆ ಭಗವತಿಯವರ ಮೂರು ಕವನಗಳು

ಜೀವನ

ಬಿತ್ತಲು ಬೇಕಾದ ಮಣ್ಣು ಕತ್ತಲು

ನನ್ನಲಿ ಕೈತುಂಬಾ ಕಾಳು ಬಿತ್ತಲು

ಆಸೆ ಅಂಜಿಕೆ ಬಿಟ್ಟರೆ ನೀ ಬೆತ್ತಲು

ವಿಜಯಕೇ ಬೇಕಾದ ಮೆಟ್ಟಲು ಹತ್ತಲು

ದಾಟದೇ ಹಾಯಾದ ಗೆರೆಗಳ ಸುತ್ತಲು

ಬುಗ್ಗೆಯೇ ಬೇಕೇನು ಬದುಕಿನ ಬಟ್ಟಲು

ಅಂಕೆ ಸಂಖೆಯ ಆಟದೆ ನಿನ ಎತ್ತಲು

ಸಂಜೆಯಾಯಿತು ಕಣ್ಣ ಮುಚ್ಚಲು ಕತ್ತಲು

ಮದುವೆ

ನಿನ್ನ ಬಳುಕು ಮೈ ಮೋಹನವಾದರೆ

ಮುರಳಿಯಾಗದಿರುವುದೇ ನನ್ನ ಮನ

ಕೊಳವಿದೆ ಅಲ್ಲಿ ನನ್ನ ಅಂಗಳದಲ್ಲಿ

ಅದರೊಳಗೆ ಮುಳುಗಿ ಮಿಂದು ಬಾ

ಬಿಗುಮಾನಗಳ ಕಳೆದು, ತೊಳೆದು

ಗಂಟು ಗುಣಿಕೆಗಳ ಸಡಿಲಿಸಿ ಬಾ

ದಿಂಡೆ ಬಾಳೆಯಂತಾದರೆ ನಿನ್ನ ಕಾಲಿಗೆ

ನೂರಡಿಯಾಗದೇನು ನನ್ನ ಜೊಲ್ಲು ನಾಲಿಗೆ

ಕೈಗೆ ಕೈಯಿಟ್ಟು, ಬಾಯಿಗೆ ಮುತ್ತಿಟ್ಟರೆ ನೀನು

ನಾಳೆ ನಾಳೆಗಳಿಗೆ ತೊತ್ತಿಡುವೆ ನಾನು

ಮೋಹನವಲ್ಲದ ಮೈ, ದಿಂಡಲ್ಲದ ಕಾಲ್ಗಳಿದ್ದರೆ

ಹಸಿರಾಗು ನೀ ಹೆಮ್ಮರವಾಗಿ

ಮುರಳಿಯಾಗದ ನನ್ನ ಮನ

ಟೊಂಗೆ ಟೊಂಗೆ ಜಿಗಿಯುವುದು ಮರ್ಕಟವಾಗಿ

ಪಯಣ

ಪಯಣದ ರೀತಿ ನೀತಿ ಸರಳ ಶುದ್ಧ ದಾರಿಯಾಗಿದೆ

ಇನ್ನೂ ಸ್ವಲ್ಪ ಕ್ರಮಿಸಿ ನೋಡೋಣ

ಅಲ್ಪ ವಿರಮಿಸಿ, ಶ್ರಮಿಸಿ ನೋಡೋಣ

ಸಂಬಂಧಗಳಡಿ ಬಂಧಿಯಾಗಲಾತುರವೇಕೆ

ಸಡಿಲ ದಾರಗಳ ಮೇಲೆ ಕಟ್ಟಿದ ಸೇತುವೆ ಬೀಳಿಸಲು ಒಂದೇ ಪ್ರಶ್ನೆ ಯಾಕೆ

ಬಂಧಗಳ ಸಾರ ಕರಗಿದಾಗ ದಾರ ಹರಿಯದೆ?

ಆ ದಿನ ಬಂದಾಗ, ಬಗ್ಗದ ಈ ಬಿದಿರು ಮುರಿಯದೆ?

ದಾರದ ಸತ್ವ ಕರಗುವ ಮುನ್ನ ಸ್ವಲ್ಪ ತಗ್ಗಿಸಿ ನೋಡೋಣ

ಬೆದರದ ಬಿದಿರು ಮುರಿಯುವ ಮುನ್ನ ಸ್ವಲ್ಪ ಬಗ್ಗಿಸಿ ನೋಡೋಣ

ಹೇಳಲು ಒಂದು ಮನೆಯಿದೆ, ಬೇರೆಯಲ್ದು ಒಂದು ಭ್ರಮೆಯಿದೆ

ಬೇರೆಯಾದ ಭ್ರಮೆಯಾಚೆ, ಅಗಣಿತ ಅಪರಿಮಿತ ನಲುಮೆಯಿದೆ

ನೀ ನಡೆಯಲೊಪ್ಪದ ದಾರಿಯ ಕೊನೆಯಲ್ಲಿ ಮಸಣವಿದೆ

ನೀ ಓಡುವ ಗೆಲುವಿನ ದಾರಿ ಅದೇ ಅಲ್ಲವೇ

ಸಂಕುಚಿತ ಸೀಮೆಗಳಿಂದಾಚೆ ಅವಕಾಶಗಳ ಎನಿಸಿ ನೋಡೋಣ

ಅಲ್ಲಿಗೆ ಹತ್ತಿರದ ದಾರಿ ಬಿಟ್ಟು ಸುತ್ತದ ದಾರಿ ಬಳಸಿ ನೋಡೋಣ

ಪಯಣದ ರೀತಿ ನೀತಿ ಸರಳ ಶುದ್ಧ ದಾರಿಯಾಗಿದೆ

ಇನ್ನೂ ಸ್ವಲ್ಪ ಕ್ರಮಿಸಿ ನೋಡೋಣ

ಅಲ್ಪ ವಿರಮಿಸಿ, ಶ್ರಮಿಸಿ ನೋಡೋಣ

ಅಮರಪ್ರೇಮ (ಕತೆ): ಕೇಶವ ಕುಲಕರ್ಣಿ (ಎರಡನೇ ಕಂತು)

ಮೊದಲ ಕಂತನ್ನು ಇನ್ನೂ ಓದಿಲ್ಲದಿದ್ದರೆ, ಓದಲು ಇಲ್ಲಿ ಒತ್ತಿ

ಭಾಗ 2: ಇಸ್ವಿ 1989

ಅಮರನಿಗೆ ಪ್ರೇಮಾಳನ್ನು ನೋಡುವ ಅದಮ್ಯ ಹಂಬಲ ಮತ್ತೆ ಹುಟ್ಟಿದ್ದು, ತನ್ನ ಮಗುವಿನ ನಾಮಕರಣದ ಸಮಯದಲ್ಲಿ.  

ಅಮರ ಮತ್ತು ಉಷಾ ತಮ್ಮ ಹೆಣ್ಣುಮಗುವಿಗೆ ಹೆಸರು ಹುಡುಕುತ್ತಿದ್ದರು. ಹುಟ್ಟುವ ಮೊದಲು ಮಗು ಗಂಡೋ ಹೆಣ್ಣೋ ಗೊತ್ತಿರಲಿಲ್ಲ. ಗರ್ಭದಲ್ಲಿನ ಮಗು ಗಂಡೋ ಹೆಣ್ಣೋ ಎಂದು ಪತ್ತೆ ಮಾಡುವುದು ತನ್ನ ಆದರ್ಶದ ವಿರುದ್ಧವೆಂದು ಅಮರ ಬಗೆದಿದ್ದ (ಆಗಿನ್ನೂ ಕಾನೂನು ಅಷ್ಟು ಗಡುಸಾಗಿರಲಿಲ್ಲ) . ಮಗುವಿನ ಹೆಸರನ್ನು ಮಗು ಹುಟ್ಟುವ ಮೊದಲು ನಿರ್ಧಾರ ಮಾಡಿದರೆ ಅಪಶಕುನವೆಂದು ಉಷಾ ನಂಬಿದ್ದಳು. 

ಹೆಣ್ಣು ಮಗು ಹುಟ್ಟಿ ಮೂರು ವಾರದ ಬಳಿಕ ಗಂಡ ಹೆಂಡತಿ ಇಬ್ಬರೇ ಮಗುವಿಗೆ ಏನು ಹೆಸರು ಇಡುವುದೆಂದು ಒಂದು ಚಂದದ ಜಗಳವಾಡುತ್ತಿದ್ದರು. ಅಮರ ಮಗುವನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡಿದ್ದ. ಉಷಾ ಒಂದು ಹೆಸರು ಹೇಳುವುದು, ಅದಕ್ಕೆ ಅಮರ ಏನಾದರೂ ತಗಾದೆ ತೆಗೆಯುವುದು, ಅಮರ ಒಂದು ಹೆಸರು ಹೇಳುವುದು, ಅದಕ್ಕೆ ಉಷಾ ಮೂಗು ಮುರಿಯುವುದು, ಅವಳು ಹೇಳಿದ ಹೆಸರನ್ನು ಚಿಕ್ಕದಾಗಿ ಕರೆದರೆ ಚೆನ್ನಾಗಿರುವುದಿಲ್ಲ ಎಂದು ಇವನು ಹೇಳುವುದು, ಇವನು ಹೇಳಿದ ಹೆಸರಿನ ಮೊದಲ ಅಕ್ಷರದ್ದೋ ಕೊನೆಯ ಅಕ್ಷರದ್ದೋ ಉಚ್ಚಾರ ಸರಿ ಇಲ್ಲ ಎಂದು ಇವಳು ಹೇಳುವುದು ನಡೆಯುತ್ತಿತ್ತು. 

ಹೀಗೆ ವಾದ ನಡೆಯುತ್ತಿರಬೇಕಾದರೆ, ಉಷಾ, `ಪ್ರೇಮಾ ಎನ್ನುವ ಹೆಸರು ಹೇಗೆ?` ಎಂದಳು. ಉಷಾ `ಓಂ` ಮತ್ತು `ನಮ್ಮೂರ ಮಂದಾರ ಹೂವೇ` ಸಿನೆಮಾಗಳಲ್ಲಿ ನಟಿಸಿದ ಪ್ರೇಮಾಳ ಫ್ಯಾನ್ ಆಗಿದ್ದಳು. ಅಮರನ ಕಣ್ಣುಗಳಲ್ಲಿ ಒಂದು ಸಾವಿರ ವ್ಯಾಟಿನ ಮಿಂಚು ಮಿನುಗಿತು, ಮುಖದಲ್ಲಿ ಒಂದು ಕ್ಷಣ ಚಹರೆಯೇ ಬದಲಾಯಿತು; ಆದರೆ ತಕ್ಷಣವೇ ಸಾವರಿಕೊಂಡು `ಉಹುಂ, ಚೆನ್ನಾಗಿಲ್ಲ, ತುಂಬಾ ಹಳೆಯ ಹೆಸರು,` ಎಂದ. ಆದರೆ ಉಷಾ ಅವನ ಕಣ್ಣುಗಳಲ್ಲಿ ಮೂಡಿದ ಮಿಂಚನ್ನು, ಮುಖದ ಚಹರೆ ಬದಲಾದದ್ದನ್ನು ಗಮನಿಸಿದ್ದಳು, ಅವನಿಗೆ ‘ಪ್ರೇಮಾ` ಎನ್ನುವ ಹೆಸರು ಇಷ್ಟವಾಗಿದೆ, ಸುಮ್ಮನೇ ತನ್ನನ್ನು ಸತಾಯಿಸಲು ಇಷ್ಟವಿಲ್ಲ ಎಂದು ಸುಳ್ಳು ಹೇಳುತ್ತಿದ್ದಾನೆ ಎಂದುಕೊಂಡಳು. `ಪ್ರೇಮಾ ಎನ್ನುವ ಹೆಸರು ತುಂಬ ಚೆನ್ನಾಗಿದೆ, ಇವಳು ನಮ್ಮಿಬ್ಬರ ಪ್ರೇಮದ ಫಲವಲ್ಲವೇ?` ಎಂದು, `ಪ್ರೇಮಾ` ಎನ್ನುವ ಹೆಸರಿನ ಮೇಲೆ ಪಟ್ಟು ಹಿಡಿದಳು. ಅಮರ ಏನೇನೋ ಸಾಬೂಬು ಹೇಳಲು ಹೋದ, ಆದರೆ ಉಷಾ ಪಟ್ಟು ಬಿಡಲಿಲ್ಲ. ಆ ಹೆಸರು ಅವನ ಅಮ್ಮನಿಗೂ ತುಂಬ ಇಷ್ಟವಾಯಿತು. ವಿಧಿಯಿಲ್ಲದೇ ಒಪ್ಪಿಕೊಂಡ. 

ಅದೇ ಸಮಯಕ್ಕೆ ಪುಟ್ಟ ಮಗು ಉಚ್ಚೆ ಮಾಡಿ ಅವನ ಪ್ಯಾಂಟನ್ನೆಲ್ಲ ಒದ್ದೆ ಮಾಡಿತು. ತಕ್ಷಣವೇ ಮಕ್ಕಳ ವಿಭಾಗ ಪೋಸ್ಟಿಂಗಿನಲ್ಲಿ ತಾನು ಮಗುವೊಂದನ್ನು ಪರೀಕ್ಷೆ ಮಾಡಲು ಎತ್ತಿಕೊಂಡಾಗ, ಆ ಮಗು ತನ್ನ ಪ್ಯಾಂಟಿನ ಮೇಲೆ ಉಚ್ಚೆ ಮಾಡಿದಾಗ ಮೂಗಿಗೆ ಬಡಿದ ವಾಸನೆ, ಆಗ ಪಕ್ಕದಲ್ಲೇ ಇದ್ದ ಪ್ರೇಮಾ ನಗು ತಡೆಯಲಾಗದೇ ಐದು ನಿಮಿಷ ನಕ್ಕಿದ್ದು ನೆನಪಾಯಿತು. 

ಅವತ್ತಿನಿಂದ ಮಗಳಿಗೆ `ಪ್ರೇಮಾ` ಎಂದು ನಾಮಕರಣ ಮಾಡುವ ದಿನದವರೆಗೂ ಪ್ರತಿದಿನ ಅಮರನಿಗೆ ಪ್ರೇಮಾಳನ್ನು ನೋಡುವ ಹಂಬಲ ಹೆಚ್ಚಾಗುತ್ತಲೇ ಹೋಯಿತು. ತನ್ನ ಬಳಿಯಿದ್ದ ಪ್ರೇಮಾಳ ಬೆಂಗಳೂರಿನ ನಂಬರಿಗೆ ಫೋನು ಮಾಡಿದ. ಯಾರೂ ಎತ್ತಲಿಲ್ಲ (ಪ್ರೇಮಾಳ ತಾಯಿ ತಂದೆ ಅಮೇರಿಕಕ್ಕೆ ಮಗಳ ಹತ್ತಿರ ಹೋಗಿದ್ದರು). 

ಭಾಗ 3: ಇಸ್ವಿ 1996

ಅಮರನಿಗೆ ಪ್ರೇಮಾಳನ್ನು ನೋಡುವ ಅದಮ್ಯ ಹಂಬಲ ಮತ್ತೆ ಹುಟ್ಟಿದ್ದು, ಅವನ ಎಂ.ಬಿ.ಬಿ.ಎಸ್ ರೂಮ್-ಮೇಟ್ ಮಲ್ಲಿಕಾರ್ಜುನನಿಗೆ ಫೋನು ಮಾಡಿ ಇಟ್ಟ ಮೇಲೆ.  

ಅಮರ ಮೈಸೂರಿನಲ್ಲಿ ಎಂ.ಬಿ.ಬಿ.ಎಸ್ ಮುಗಿಸಿ, ಪುಣೆಯಲ್ಲಿ ಪಿ.ಜಿ ಮಾಡಲು ಹೋದಾಗಲೇ ಮೈಸೂರಿನ ಅವನ ಬಹುತೇಕ ಕ್ಲಾಸ್‍ಮೇಟುಗಳೆಲ್ಲ ಅಮೇರಿಕ ಮತ್ತು ಇಂಗ್ಲಂಡಿಗೆ ಹಾರಲು ತಯಾರಿ ಮಾಡಿದ್ದರು. ಅಮರನ ಬಹುತೇಕ ಕ್ಲಾಸ್‍ಮೇಟುಗಳೆಲ್ಲ ಬೆಂಗಳೂರು ಮೈಸೂರು ಮಂಗಳೂರಿನ ಕಡೆಯವರು ಬೇರೆ. ಉತ್ತರ ಕರ್ನಾಟಕದವರು ಬೆರಳಣಿಕೆಯಷ್ಟು ಮಾತ್ರ ಇದ್ದರು. ಹೀಗಾಗಿ ಇಂಟರ್ನೆಟ್ಟು ಮೊಬೈಲುಗಳಿಲ್ಲದ ಆ ಕಾಲದಲ್ಲಿ ಜಮಖಂಡಿಯ ಅಮರ ಮೈಸೂರು ಬಿಟ್ಟು ಪಿ.ಜಿ ಮಾಡಲು ಪುಣೆ ಸೇರಿದ ಮೇಲೆ ಅವನ ಸಂಪರ್ಕದಲ್ಲಿ ಇದ್ದುದು ಗೋಕಾಕಿನಿಂದ ಬಂದಿದ್ದ ಅವನ ರೂಮ್‍ಮೇಟ್ ಆಗಿದ್ದ ಮಲ್ಲಿಕಾರ್ಜುನನ ಜೊತೆ ಮಾತ್ರ. ಮಲ್ಲಿಕಾರ್ಜುನ ಎಂ.ಬಿ.ಬಿ.ಎಸ್ ಮುಗಿಸಿ ಪಿ.ಜಿ ಮಾಡದೇ ಗೋಕಾಕಿಗೇ ಹೋಗಿ ತಂದೆಯಿಂದ ಇನ್ನೂರು ಎಕರೆ ಜಮೀನಿನ ಉಸ್ತುವಾರಿ ತೆಗೆದುಕೊಂಡು ಪ್ರಾಕ್ಟೀಸನ್ನೂ ಆರಂಭಿಸಿದ್ದ. ಅಮರ ಆರು ತಿಂಗಳು ವರ್ಷಕ್ಕೊಮ್ಮೆ ಜಮಖಂಡಿಗೆ ಬಂದಾಗ ಮಲ್ಲಿಕಾರ್ಜುನನ್ನು ತಪ್ಪದೇ ಭೇಟಿಯಾಗುತ್ತಿದ್ದ. ಮಲ್ಲಿಕಾರ್ಜುನ ಜಮಖಂಡಿಗೆ ಬರುತ್ತಿದ್ದ, ಇಲ್ಲವೇ ಅಮರ ಗೋಕಾಕಿಗೆ ಹೋಗುತ್ತಿದ್ದ. ಹೀಗೆ ಮಲ್ಲಿಕಾರ್ಜುನ ಮೈಸೂರು ಮೆಡಿಕಲ್ ಕಾಲೇಜಿನ ಏಕೈಕ ಕೊಂಡಿಯಾಗಿದ್ದ. ಅಮರ ಪಿ.ಜಿ ಮುಗಿದ ಮೇಲೆ ಪುಣೆಯಲ್ಲೇ ಪ್ರಾಕ್ಟೀಸು ಮಾಡುತ್ತಿದ್ದ.  ಉಷಾಳನ್ನು ಮದುವೆಯಾದ, ಮಗಳಾದಳು, ಪುಣೆಯಲ್ಲೇ ಮನೆ ಕಟ್ಟಿದ. 

ಇಷ್ಟೆಲ್ಲ ಕಾಲ ಕಳೆದಿದ್ದರೂ ಇನ್ನೂ ಮೊಬೈಲು ಅದೇ ತಾನೆ ಕಾಲಿಡುತ್ತಿದ್ದ, ಮನೆಯಲ್ಲಿ ಫೋನು ಇದ್ದರೆ ಶ್ರೀಮಂತರು ಎಂದು ಅಂದುಕೊಳ್ಳುವ ಕಾಲವದು. ಆದರೆ ಲ್ಯಾಂಡ್‍ಲೈನಿನಿಂದ ಎಸ್.ಟಿ.ಡಿ ಸುಲಭವಾಗಿತ್ತು ಅನ್ನುವಷ್ಟರ ಮಟ್ಟಿಗೆ ಸಂವಹನ ತಂತ್ರಜ್ಞಾನ ಮುಂದುವರೆದಿತ್ತು. ಆಸ್ಪತ್ರೆಯ ಕೆಲಸ ಮುಗಿಸಿ ರಾತ್ರಿ ತಡವಾಗಿ ಮನೆಗೆ ಬರುತ್ತಿದ್ದಂತೆಯೇ, ಹೆಂಡತಿ ಉಷಾ ಮಲ್ಲಿಕಾರ್ಜುನ ಫೋನ್ ಮಾಡಿರುವುದಾಗಿಯೂ ಯಾವ ವಿಷಯನ್ನು ಹೇಳದೇ ಸುಮ್ಮನೆ ಮಾಡಿದ್ದೇನೆಂದು ಹೇಳಿ ಫೋನು ಇಟ್ಟನೆಂದೂ ಹೇಳಿದಳು. ಮಲ್ಲಿಕಾರ್ಜುನ ಹಾಗೆಲ್ಲ ಸುಮ್ಮಸುಮ್ಮನೇ ಫೋನು ಮಾಡುವವನಲ್ಲವೇ ಅಲ್ಲ. ಕೂಡಲೇ ಮಲ್ಲಿಕಾರ್ಜುನನಿಗೆ ಫೋನಿಸಿದ. 

`ಜುಲೈ ೧೫ ನೇ ತಾರೀಖು ಮೈಸೂರಿನಲ್ಲಿ ನಮ್ಮ ಎಂಬಿಬಿಎಸ್ ಬ್ಯಾಚಿನ ಇಪ್ಪತ್ತನೇ ವರ್ಷದ ಪುನರ್ಮಿಲನವಿದೆ, ನಾನು ಹೋಗುತ್ತಿದ್ದೇನೆ ಸುಕುಟುಂಬ ಸಮೇತ, ನೀನೂ ಅಷ್ಟೇ, ತಪ್ಪಿಸಬೇಡ, ಫ್ಯಾಮಿಲಿ ಜೊತೆ ಬಾ`, ಎಂದು ಮಲ್ಲಿಕಾರ್ಜುನ. ಫೋನು ಇಡುತ್ತಿದ್ದಂತೆಯೇ ಅಮರನಿಗೆ ಪ್ರೇಮಾಳನ್ನು ನೋಡುವ ಆಸೆ ಮತ್ತೊಮ್ಮೆ ಮೂಡಿತು. ಅಮೇರಿಕದಲ್ಲಿರುವ ಪ್ರೇಮಾಳಿಗೆ ಈ ವಿಷಯ ಗೊತ್ತಿದೆಯೋ ಇಲ್ಲವೋ, ಗೊತ್ತಾದರೂ ಅವಳು ಬರುತ್ತಾಳೋ ಇಲ್ಲವೋ ಎಂದು ಪ್ರಶ್ನೆಗಳೆದ್ದವು. ಕೂಡಲೇ ಮತ್ತೆ ಮಲ್ಲಿಕಾರ್ಜುನನಿಗೆ ಫೋನು ಮಾಡಿ, ಯಾರು ಆರ್ಗನೈಸ್ ಮಾಡುತ್ತಿದ್ದಾರೆ, ಯಾವ ಹೊಟೇಲಿನಲಿ ಇಳಿದುಕೊಳ್ಳುವ ವ್ಯವಸ್ಥೆಯಾಗಿದೆ, ಎಷ್ಟು ದುಡ್ಡು, ಎಷ್ಟು ದಿನ, ಯಾರು ಯಾರು ಬರುತ್ತಿದ್ದಾರೆ ಎಂದೆಲ್ಲ ಕೇಳಿ ಒಂದಿಷ್ಟು ವಿಷಯ ತಿಳಿದುಕೊಂಡ. ಅಮೇರಿಕಕ್ಕೆ ವಲಸೆ ಹೋದ ಕೆಲವು ಗೆಳೆಯರು ಬರುತ್ತಾರೋ ಇಲ್ಲವೋ ತಿಳಿದುಕೊಂಡ. ಅಮೇರಿಕ ಮತ್ತು ಇಂಗ್ಲಂಡಿನಲ್ಲಿ ಇರುವವರಿಗೆ ರಜೆ ಇರುವ ಸಮಯ ನೋಡಿಯೇ ಜುಲೈನಲ್ಲಿ ಇಟ್ಟುಕೊಂಡಿರುವುದಾಗಿ ಮಲ್ಲಿಕಾರ್ಜುನ ಹೇಳಿದ. ನೇರವಾಗಿ ಪ್ರೇಮಾಳಿಗೆ ಈ ವಿಷಯ ಗೊತ್ತೋ ಇಲ್ಲವೋ ಕೇಳಲು ಹೋಗಲಿಲ್ಲ, ಏಕೆಂದರೆ ಮಲ್ಲಿಕಾರ್ಜುನನಿಗೂ ಕೂಡ ತನಗೆ ಆ ಕಾಲದಲ್ಲಿ ಪ್ರೇಮಾಳನ್ನು ಕಂಡರೆ ಇಷ್ಟ ಎಂಬ ಸಣ್ಣ ಸುಳಿವನ್ನೂ ಕೊಟ್ಟಿರಲಿಲ್ಲವಲ್ಲ. 

ಉಷಾ, `ಏನು ಸಮಾಚಾರ? ನಿನ್ನ ಫ್ರೆಂಡಿಗೆ ಫೋನು ಮಾಡಿ ತುಂಬ ಖುಷಿಯಲ್ಲಿ ಇದ್ದೀಯಾ?` ಎಂದು ಅಮರನನ್ನು ಕೇಳಿದಳು. 

ಅಮರ ಖುಷಿಖುಷಿಯಲ್ಲಿ ಮೈಸೂರಿನಲ್ಲಿ ನಡೆಯುವ `ಪುನರ್ಮಿಲನ`ದ ಬಗ್ಗೆ ಹೇಳಿದ. ಎಂದೂ ಜಾಸ್ತಿ ಮಾತಾಡದ ಅಮರ, ಊಟ ಮಾಡುತ್ತ, ಊಟವಾದ ಮೇಲೆ ತನ್ನ ಎಂ.ಬಿ.ಬಿ.ಎಸ್ ದಿನಗಳ ಬಗ್ಗೆ, ಗುರುಗಳ ಬಗ್ಗೆ, ಕಾಲೇಜಿನ ಬಗ್ಗೆ, ಮೈಸೂರಿನ ರಸ್ತೆ-ಗಲ್ಲಿಗಳ ಬಗ್ಗೆ, ಹೊಟೇಲುಗಳ ಬಗ್ಗೆ ಕಥೆಗಳನ್ನು ಹೇಳುತ್ತ ಹೋದ. ಮಲ್ಲಿಕಾರ್ಜುನ ಕುಟುಂಬ ಸಮೇತ ಬರುತ್ತಿರುವುದಾಗಿ ಹೇಳಿದ. ಉಷಾ ಇದನ್ನೆಲ್ಲ ಆಗಲೇ ನೂರಾರು ಸಲ ಕೇಳಿದ್ದಳು. ಆದರೂ ಈಗ ಹುಟ್ಟಿರುವ ಉತ್ಸಾಹಕ್ಕೆ ಏಕೆ ತಣ್ಣೀರೆರೆಯುವುದೆಂದು ಕೇಳಿಸಿಕೊಂಡಂತೆ ನಟಿಸಿದಳು. 

ಉಷಾ, `ನಾನೂ ಕೂಡ ಮೈಸೂರು ನೋಡಿ ಯಾವ ಕಾಲವಾಯಿತು? ಮಗಳು ಕೂಡ ಮೈಸೂರು ನೋಡಿಲ್ಲ,` ಎಂದಳು. 

ಅಮರ ಮಾರನೆಯ ದಿನವೇ ಪುಣೆಯಿಂದ ಬೆಂಗಳೂರಿಗೆ ಮೂವರಿಗೂ ರೈಲು ರಿಸರ್ವೇಶನ್ ಮಾಡಿದ.  

ಅಂದಿನಿಂದ ಅಮರನಿಗೆ ಪ್ರೇಮಳನ್ನು ನೋಡುವ ಆಸೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಯಿತು. ಇದುವರೆಗೂ ಒಂದೇ ಒಂದು ಸಲವೂ ಪ್ರೇಮದ ಸುಳಿವು ಬಿಟ್ಟುಕೊಡದ, ತುಟಿ ಸೋಕದ, ಮೈಮುಟ್ಟದ ಪ್ರೇಮಾಳನ್ನು ನೋಡುವ ಕಾತರ ಇಷ್ಟು ವರ್ಷವಾದ ಮೇಲೂ ಮತ್ತೆ ಚಿಗುರಿ ಪೆಡಂಭೂತದಂತೆ ಬೆಳೆಯುತ್ತಿರುವುದನ್ನು ನೋಡಿ ಅಮರನಿಗೆ ದಿಗಿಲಾಯಿತು, ಅದೇ ಸಮಯಕ್ಕೆ ತನ್ನ ವಯಸ್ಸು ಇಪ್ಪತ್ತು ವರ್ಷ ಹಿಂದೆ ಚಲಿಸುತ್ತಿರುವಂತೆ ಅನಿಸಿ ರೋಮಾಂಚನವೂ ಆಯಿತು.

(ಮುಂದುವರೆಯುವುದು…)

ಅಮರಪ್ರೇಮ (ಕತೆ) – ಕೇಶವ ಕುಲಕರ್ಣಿ

ಭಾಗ 1: ಇಸ್ವಿ 1987 

ಅಮರನಿಗೆ ಪ್ರೇಮಾಳನ್ನು ನೋಡಬೇಕು ಎನ್ನುವ ಅದಮ್ಯ ಹಂಬಲ ಹುಟ್ಟಿದ್ದು ಇದೇ ಮೊದಲ ಸಲವೂ ಅಲ್ಲ, ಕೊನೆಯ ಸಲವೂ ಅಲ್ಲ. 

ಅಂಥ ಒಂದು ಬಯಕೆ ಅಮರನಲ್ಲಿ ಹುಟ್ಟಿದ್ದು, ತನ್ನ ಮತ್ತು ಉಷಾಳ ಮದುವೆಯ ಆಮಂತ್ರಣ ಪತ್ರಿಕೆ ಕೈಗೆ ಸಿಕ್ಕಾಗ. ಅಪ್ಪ-ಅಮ್ಮ ಗೊತ್ತು ಮಾಡಿದ ಹುಡುಗಿಯಾಗಿದರೂ, ಅಮರನಿಗೆ ಉಷಾ ಮೊದಲ ನೋಟಕ್ಕೇ ಇಷ್ಟವಾಗಿದ್ದಳು, ಮೊದಲ ಮಾತಿನಲ್ಲೇ ಆತ್ಮೀಯಳಂತೆ ಕಂಡಿದ್ದಳು. ನಿಶ್ಚಿತಾರ್ಥವಾದ ಮೇಲೆ ಪುಣೆಯಿಂದ ಹುಬ್ಬಳ್ಳಿಗೆ ಬಂದಾಗಲೆಲ್ಲ ಉಣಕಲ್ ಕೆರೆ, ನೃಪತುಂಗ ಬೆಟ್ಟ, ಕರ್ನಾಟಕ ವಿಶ್ವವಿದ್ಯಾಲಯ, ಅಪ್ಸರಾ ಸುಜಾತಾ ಥೇಟರುಗಳ ತುಂಬೆಲ್ಲ ಓಡಾಡಿದ್ದರು, ಲವ್ ಕಮ್ ಅರೇಂಜ್ಡ್ ಮ್ಯಾರೇಜ್ ಅನ್ನುವಂತೆ. 

ತನ್ನ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ತರಲು ಅಮರ ಪ್ರಿಂಟಿಂಗ್ ಪ್ರೆಸ್ಸಿಗೆ ಹೋಗಿದ್ದ. ಕೈಯಲ್ಲಿ ಐನೂರು ಆಮಂತ್ರಣ ಪತ್ರಗಳನ್ನು ಹಿಡಿದು, ಅದರಲ್ಲಿಯ ಒಂದು ಕಾರ್ಡನ್ನು ತೆಗೆದು, ಆ ಕಾರ್ಡಿನಲ್ಲಿ ತನ್ನ ಭಾವಿ ಮಡದಿ, ‘ಉಷಾ‘ ಎಂಬ ಹೆಸರನ್ನು ನೋಡಿ ಪುಲಕಿತಗೊಂಡು, ಆ ಹೆಸರಿನ ಮೇಲೆ ಕೈಯಾಡಿಸಿ, ಕಣ್ಣು ಮುಚ್ಚಿ ಆ ಹೆಸರಿನ ಮೇಲೊಂದು ಮುತ್ತು ಕೊಡಬೇಕು ಎಂದು ಕಾರ್ಡನ್ನು ತುಟಿಯ ಬಳಿ ತಂದದ್ದೇ, ಆ ಹೊಸ ಮದುವೆ ಕಾರ್ಡಿನ ವಾಸನೆ ಮೂಗಿಗೆ ಬಡಿದು, ಇದ್ದಕ್ಕಿದ್ದಂತೆ ಪ್ರೇಮಾಳನ್ನು ನೋಡಬೇಕು ಅನಿಸಿಬಿಟ್ಟಿತು. ಇಂಥ ರೋಮ್ಯಾಂಟಿಕ್ ಮೂಡಿನಲ್ಲಿ ಇರಬೇಕಾದರೆ ಪ್ರೇಮಾಳ ನೆನಪು ಏಕೆ ಆಯಿತು, ಅವಳನ್ನು ನೋಡುವ ಆಸೆ ಯಾಕೆ ಹುಟ್ಟಿತು ಎಂದು ತನ್ನ ಮೇಲೆ ತನಗೆ ಕೋಪ ಬಂದಿತು. 

***

1976ನಲ್ಲಿ ಎಂ.ಬಿ.ಬಿ.ಎಸ್ ಓದಲು ‘ಮೈಸೂರು ಮೆಡಿಕಲ್ ಕಾಲೇಜು’ ಸೇರಿದಾಗಿನಿಂದಲೂ ಅಮರನ ಕಣ್ಣಿದ್ದುದು ತನ್ನ ಜೊತೆಗೇ ಓದುತ್ತಿದ್ದ, ಒಂದೇ ಬ್ಯಾಚಿನಲ್ಲಿದ್ದ, ದಿನವೂ ಸಿಗುತ್ತಿದ್ದ ಪ್ರೇಮಾಳ ಮೇಲೆ. ಅಮರ ಚರಂತಿಮಠ ಜಮಖಂಡಿಯವನು, ಪ್ರೇಮಾ ಗೌಡ ಬೆಂಗಳೂರಿನವಳು. ಅಮರ ಲಿಂಗಾಯತ, ಪ್ರೇಮಾ ಒಕ್ಕಲಿಗಳು. ಅಮರ ಶಾಲಾಮಾಸ್ತರನ ಮಗ, ಪ್ರೇಮಾ ಇಂಜಿನಿಯರನ ಮಗಳು. ಅಮರನ ಮನೆಯಲ್ಲಿ ಒಬ್ಬಳು ಅಕ್ಕ, ಇಬ್ಬರು ತಂಗಿಯರು ( ತಂಗಿಯರ ಮದುವೆಯ ಜವಾಬ್ದಾರಿ ಅಮರನದು ಎನ್ನುವುದು ಅಲಿಖಿತ ನಿಯಮ), ಪ್ರೇಮಾಳೇ ಅವಳ ಮನೆಯಲ್ಲಿ ಹಿರಿಯಳು, ಅವಳಿಗೆ ಒಬ್ಬ ತಮ್ಮ. ಅಮರ ಕನ್ನಡ ಮಾಧ್ಯಮ, ಪ್ರೇಮಾ ಇಂಗ್ಲೀಷ್ ಮೀಡಿಯಂ. ಅಮರ ಸಂಕೋಚದ ಮುದ್ದೆ, ಪ್ರೇಮಾ ಉತ್ಸಾಹದ ಬುಗ್ಗೆ. ಅಮರನಿಗೆ ಹಿಂದಿ ಹಾಡುಗಳೆಂದರೆ ಪ್ರಾಣ, ಪ್ರೇಮಾಳಿಗೆ ಇಂಗ್ಲೀಷ್ ಹಾಡುಗಳ ಹುಚ್ಚು. ಒಟ್ಟಿನಲ್ಲಿ ಅವರಿಬ್ಬರೂ ‘ಮೈಸೂರು ಮೆಡಿಕಲ್ ಕಾಲೇಜಿ’ನಲ್ಲಿ ಒಂದೇ ಕ್ಲಾಸಿನಲ್ಲಿ ಅದರಲ್ಲೂ ಒಂದೇ ಬ್ಯಾಚಿನಲ್ಲಿ ಇರುತ್ತಾರೆ ಎನ್ನುವುದರ ಹೊರತಾಗಿ, ಇಬ್ಬರಲ್ಲೂ ಹೊಂದುವ ಒಂದೇ ಒಂದು ಗುಣವೂ ಇರಲಿಲ್ಲವಾದರೂ, ಅಮರನಿಗೆ ಪ್ರೇಮಾ ಸಿಕ್ಕಾಪಟ್ಟೆ ಇಷ್ಟವಾಗಿಬಿಟ್ಟಿದ್ದಳು.   

ಮೊದಲ ವರ್ಷದ ಅಂಗರಚನಾಶಾಸ್ತ್ರದಿಂದ ಹಿಡಿದು ಕೊನೆಯ ವರ್ಷದ ಕೊನೆಯ ಕ್ಲಿನಿಕ್‍ವರೆಗೆ ಇಬ್ಬರೂ ಒಂದೇ ಬ್ಯಾಚಿನಲ್ಲಿದ್ದರು. ಏಕವಚನದಲ್ಲಿ ಮಾತಾಡುತ್ತಾರೆ ಎನ್ನುವುದನ್ನು ಬಿಟ್ಟರೆ ಅವರಿಬ್ಬರ ನಡುವೆ ಅಂಥ ಸಲಿಗೆ ಏನೂ ಇರಲಿಲ್ಲ. ಗುಂಪಿನಲ್ಲಿ ಎಲ್ಲರೂ ಮಾತಾಡುವಂತೆ ಮಾತಾಡುತ್ತಿದ್ದರು. ಆದರೆ ಅಮರ ಅವಳು ಬೆಳಿಗ್ಗೆ ಸಿಗುವುದನ್ನೇ ಕಾಯುತ್ತ ಪ್ರತಿ ರಾತ್ರಿ ನಿದ್ದೆ ಹೋಗುತ್ತಿದ್ದ. ಅಮರನಿಗೆ ಕನಸುಗಳನ್ನು ಹೆಣೆಯಲು, ಅವಳ ಒಂದು ‘ಗುಡ್ ಮಾರ್ನಿಂಗ್’, ಒಂದು ಮುಗುಳ್ನಗು, ಒಂದು ಹಿಡಿಯಷ್ಟು ಮಾತು ಸಾಕಾಗುತ್ತಿತ್ತು. ತನಗೆ ಅವಳನ್ನು ಕಂಡರೆ ಇಷ್ಟ ಎನ್ನುವ ಸುಳಿವನ್ನು ಅವಳಿಗೇನು, ತನ್ನ ಹಾಸ್ಟೇಲಿನ ರೂಮ್‍ಮೇಟ್ ಮಲ್ಲಿಕಾರ್ಜುನನಿಗೂ ಬಿಟ್ಟುಕೊಟ್ಟಿರಲಿಲ್ಲ. ಎಲ್ಲಿ ಅವಳ ಆ ಒಂದು ನಗು ಮತ್ತು ಒಂದಿಷ್ಟು ಮಾತು ಕೂಡ ಕಳೆದು ಹೋಗಿ ಬಿಡುವುದೋ ಎನ್ನುವ ಭಯ. ಗುಂಪಿನಲ್ಲಿ ಗೋವಿಂದನಾಗಿ ಕ್ಯಾಂಟೀನಿಗೆ ಹೋಗುತ್ತಿದ್ದ, ಆಗಾಗ ಡಿನ್ನರಿಗೆ ಗೆಳೆಯರೆಲ್ಲ ಸೇರಿ ಆರ್-ಆರ್-ಆರ್-ಗೆ (ಮೈಸೂರಿನ ಪ್ರಸಿದ್ಧ ಆಂಧ್ರದ ಚಿಕನ್ ಬಿರಿಯಾನಿ ಸಿಗುವ ಹೊಟೇಲು) ಹೋಗುತ್ತಿದ್ದರು (ಪ್ರೇಮಾ ಚಿಕನ್ ಬಿರಿಯಾನಿ ತಿನ್ನುವಾಗ, ತಾನು ಸೊಪ್ಪಿನ ಸಾರು ಹಾಕಿಕೊಂಡು ಅನ್ನ ತಿನ್ನುತ್ತಿದ್ದ). ಬೈಕಿನಲ್ಲಿ ಚಾಮುಂಡಿ ಬೆಟ್ಟಕ್ಕೋ, ಕನ್ನಂಬಾಡಿಗೋ (ಕೆ ಆರ್ ಎಸ್ ಆಣೆಕಟ್ಟು) ಹೋಗುತ್ತಿದ್ದರು; ಅಂಥ ದಿನಗಳಲ್ಲಿ ಅವಳು ಒಬ್ಬಳೇ ಒಂದೈದು ನಿಮಿಷ ಮಾತಿಗೆ ಸಿಕ್ಕರೂ ಆಕಾಶದಲ್ಲಿ ಹಾರಾಡುತ್ತಿದ್ದ. ಇಷ್ಟೆಲ್ಲ ಆದರೂ ಅಮರ ನಾಕೂವರೆ ವರ್ಷದಲ್ಲಿ ಪ್ರೇಮಾಳ ಜೊತೆ ಒಂದೇ ಒಂದು ಗೆರೆ ಮುಂದೆ ದಾಟಲಿಲ್ಲ, ಒಂದೇ ಒಂದು ಮಾತು ಹೆಚ್ಚು ಆಡಲಿಲ್ಲ. 

ಎಂ.ಬಿ.ಬಿ.ಎಸ್ ಮುಗಿದು ಜ್ಯೂನಿಯರ್ ಡಾಕ್ಟರ್ (ಇಂಟರ್ನ್‍‍ಶಿಪ್) ಆಗಿ ಕೆಲಸ ಬರುತ್ತಿದ್ದಂತೆ ಅಮರ ಸ್ವಲ್ಪ ಚಿಗುರಿಕೊಂಡ, ಏಕೆಂದರೆ ಮೊಟ್ಟಮೊದಲ ಬಾರಿಗೆ ಸ್ಟೈಪೆಂಡ್ ಎಂಬ ಹೆಸರಿನಲ್ಲಿ ಕೈಯಲ್ಲಿ ಒಂಡಿಷ್ಟು ದುಡ್ಡು ತಿಂಗಳೂ ತಿಂಗಳೂ ಕೈಬರುವ ದಿನಗಳವು. ಮೊಟ್ಟಮೊದಲ ಬಾರಿಗೆ ಅವಳ ಜೊತೆ ಕಾಲೇಜ್ ಕ್ಯಾಂಟೀನಿನಲ್ಲಿ ಒಬ್ಬನೇ ಕೂತು ಕಾಫಿ ಕುಡಿಯುತ್ತಿದ್ದ. ಕಲ್‍ಬಿಲ್ಡಿಂಗನ್ನೂ ದಾಟಿ, ಧನ್ವಂತ್ರಿ ರೋಡಿನ ‘ಗಾಯತ್ರಿ ಭವನ’ದಲ್ಲಿ ಅವಳೊಟ್ಟಿಗೆ ದೋಸೆ ತಿನ್ನುತ್ತಿದ್ದ. ಪ್ರೇಮಾ ಕೂಡ ಅವನು ಕರೆದಾಗಲೆಲ್ಲ ಖುಷಿ ಖುಷಿಯಲ್ಲಿ ಬರುತ್ತಿದ್ದಳು. ಆರು ತಿಂಗಳು ಮುಗಿಯುತ್ತಿದ್ದಂತೆ ಅವರ ರೂರಲ್ ಪೋಸ್ಟಿಂಗುಗಳು ಶುರುವಾದವು. ಆಗ ಅಮರನು ಎಲ್ಲೊ, ಪ್ರೇಮಳು ಏಲ್ಲೋ. ಆಗಿನ್ನೂ ಮೊಬೈಲು ಇಂಟರ್ನೆಟ್ಟು ಯಾವುದೂ ಇರಲಿಲ್ಲ. ಹೀಗಾಗಿ ಅವರಿಬ್ಬರ ಸಂಪರ್ಕ ಮತ್ತು ಭೇಟಿ ಹೆಚ್ಚು ಕಡಿಮೆ ನಿಂತೇ ಹೋಯಿತು. ಇತ್ತ ಪಿ.ಜಿ ಎಂಟ್ರನ್ಸ್ ಪರೀಕ್ಷೆ ಕೂಡ ಹತ್ತಿರ ಬರುತ್ತಿತ್ತು. ಎಲ್ಲರೂ ಪರೀಕ್ಷೆಯ ತಯಾರಿಯಲ್ಲಿ ತೊಡಗಿದರು. ಅಮರನೂ ಓದಲು ಕೂತ, ಒಳ್ಳೆಯ ಕಡೆ ಪಿ.ಜಿ ಸೀಟು ಸಿಕ್ಕಿದರೆ ಪ್ರೇಮಾಳಿಗೆ ತನ್ನ ಮನಸ್ಸಿನ ಹಂಬಲ ಹೇಳಿ ಬಿಡುವ ಆಸೆಯಿಂದ ಎಲ್ಲರಿಗಿಂತ ತುಸು ಚೆನ್ನಾಗಿಯೇ ಓದಿದ. ಎಂಟ್ರನ್ಸ್ ಬರೆಯುವಾಗ ಪ್ರೇಮಾ ಸಿಕ್ಕಿದಳು, ಪರೀಕ್ಷೆ ಮುಗಿದ ಮೇಲೆ ಗೆಳೆಯರ ಗುಂಪಿನಲ್ಲಿ `ಮೈಲಾರಿ`ಗೆ ಹೋಗಿ ದೋಸೆ ತಿಂದು, ಅಲ್ಲಿಂದ ಚಾಮುಂಡಿ ಬೆಟ್ಟಕ್ಕೆ ಹೋಗಿ ತಮಗೆ ಓಳ್ಳೆಯ ರ‍್ಯಾಂಕ್‌ ಬರಲಿ ಎಂದು ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸಿದರು. ಆಗ ಪ್ರೇಮಾ ಅವನ ತಲೆಗೆ ತಿಲಕವನ್ನು ಇಟ್ಟು `ಬೆಸ್ಟ್ ಆಫ್ ಲಕ್` ಹೇಳಿದಳು. ಚಾಮುಂಡೇಶ್ವರಿಗೆ ಮನದಲ್ಲೇ ಕೃತಜ್ಞತೆ ಸಲ್ಲಿಸಿದ ಅಮರನಿಗೆ ಆಕಾಶಕ್ಕೆ ಮೂರೇ ಗೇಣು.    

ಜ್ಯೂನಿಯರ್ ಡಾಕ್ಟರ್ ಮುಗಿಯುವ ಸಮಯದಲ್ಲಿ ಪಿ.ಜಿ ಎಂಟ್ರನ್ಸಿನ ಫಲಿತಾಂಶ ಬಂತು. ಅಮರನಿಗೆ ಒಳ್ಳೆಯ ರ‍್ಯಾಂಕ್‌ ಬಂದ್ದಿತ್ತು, ಅವನ ರ‍್ಯಾಂಕಿಗೆ ಅವನಿಗೆ ಒಳ್ಳೆಯ ಕಡೆ ಸೀಟು ಸಿಗುವುದು ಖಾತ್ರಿ ಇತ್ತು. ರಿಸಲ್ಟು ಗೊತ್ತಾದ ತಕ್ಷಣ ಮೊಟ್ಟಮೊದಲು ಅವನಿಗೆ ಹೇಳಬೇಕು ಅನಿಸಿದ್ದು ಪ್ರೇಮಾಳಿಗೆ. ಗೈನೆಕಾಲಾಜಿ ಪೋಸ್ಟಿಂಗಿನಲ್ಲಿದ್ದ ಪ್ರೇಮಾಳಿಗೆ ವಿಚಾರ ತಿಳಿಸಲು ಲಗುಬಗೆಯಿಂದ ನಡೆದ. ಪ್ರೇಮಾಳಿಗೆ ಕೂಡ ಒಳ್ಳೆಯ ರ‍್ಯಾಂಕ್‌ ಬಂದಿತ್ತು. ಚಲುವಾಂಬಾ ಆಸ್ಪತ್ರೆಯ ಹತ್ತಿರ ಹೋಗುತ್ತಿರಬೇಕಾದರೆ, ಪ್ರೇಮಾ ಕೂಡ ಅಷ್ಟೇ ಲಗುಬಗೆಯಿಂದ ಹೊರಬರುತ್ತಿದ್ದಳು. ಅಮರನನ್ನು ನೋಡುತ್ತಿದ್ದಂತೆ ಅವಳ ಕಣ್ಣುಗಳೂ ಅರಳಿದವು, ದೂರದಿಂದಲೇ ಕೈಯಾಡಿಸಿದಳು. ಇಬ್ಬರೂ ಹತ್ತಿರ ಬರುತ್ತಿದ್ದಂತೆ, ಇಬ್ಬರೂ ಒಟ್ಟಿಗೇ `ಕಾಂಗ್ರ್ಯಾಟ್ಸ್` ಹೇಳಿದರು, ನಂತರ ಇಬ್ಬರೂ ಒಟ್ಟಿಗೇ ನಕ್ಕರು, ನಂತರ ಮತ್ತೆ ಒಟ್ಟಿಗೇ `ಕಾಂಗ್ರಾಟ್ಸ್` ಹೇಳಿದರು, ಮತ್ತೆ ನಕ್ಕರು. ಅಮರನಿಗೆ ಪಿಜಿ ಸೀಟು ಸಿಕ್ಕಿದ್ದು ಸಾರ್ಥಕವೆನಿಸಿಬಿಟ್ಟಿತು. ಇಬ್ಬರೂ ಹೊಸ ಊರಿನಲ್ಲಿ (ಮುಂಬೈ ಅಥವಾ ದಿಲ್ಲಿ) ಒಂದೇ ಕಾಲೇಜಿನಲ್ಲಿ ಪಿ.ಜಿ ಮಾಡಬಹುದು, ತನ್ನ ಪ್ರೇಮ ಚಿಗುರೊಡೆಯಬಹುದು ಎಂದೆಲ್ಲ ಅವನ ಮುಂದಿನ ಮೂರು ವರ್ಷದ ಕನಸುಗಳು ಮೂರು ಸೆಕೆಂಡಿನಲ್ಲಿ ಅವನ ಮನಸ್ಸಿನ ಪರದೆಯ ಮೇಲೆ ಚಲಿಸಿದವು. ಆಗ ಪ್ರೇಮಾ ತನ್ನ ಬ್ಯಾಗಿನಿಂದ ಒಂದು ಲಕೋಟೆಯನ್ನು ಕೊಟ್ಟಳು. ಅದೊಂದು ಗ್ರೀಟಿಂಗ್ ಕಾರ್ಡು ತರಹ ಇತ್ತು, ಅದು `ಕಾಂಗ್ರ್ಯಾಚುಲೇನ್` ಕಾರ್ಡಿರಬಹುದು, ಅದರೊಳಗೆ ಪ್ರೇಮಾ ತನ್ನ ಪ್ರೇಮಪತ್ರವನ್ನು ಇಟ್ಟಿರಬಹುದು ಎಂದುಕೊಂಡ. ಲಕೋಟೆಯನ್ನು ಕೈಗೆ ತಗೆದುಕೊಂಡಾಗ ಅವನ ಹೃದಯ ಬಡಿತ ನಗಾರಿಯಾಗಿ ಎಲ್ಲಿ ಪ್ರೇಮಳಿಗೆ ಕೇಳಿಸಿಬಿಡುತ್ತೋ ಎಂದು ನಾಚಿಕೊಂಡ. 

`ಇಲ್ಲೇ ತೆಗೆಯಬಹುದಾ?` ಎಂದ.

`ಪ್ಲೀಸ್,` ಎಂದಳು ಪ್ರೇಮಾ. ಅವಳ ಕಣ್ಣುಗಳು ಮಿಂಚುತ್ತಿದ್ದವು.

ಲಕೋಟೆ ಹರಿದರೆ, ಒಳಗೆ ಕಾರ್ಡು. ಕಾರ್ಡು ಹೊರ ತೆರೆದರೆ ಲಗ್ನಪತ್ರಿಕೆ! ಅದೂ ಪ್ರೇಮಾಳ ಲಗ್ನಪತ್ರಿಕೆ!! 

ಹುಡುಗನೂ ಡಾಕ್ಟರಂತೆ, ಅಮೇರಿಕದಲ್ಲಿ ಪಿ.ಜಿ ಮಾಡುತ್ತಿದ್ದಾನಂತೆ, ತನಗಿಂತ ಬರೀ ಮೂರು ವರ್ಷ ದೊಡ್ಡವನಂತೆ, ಬೆಂಗಳೂರಿನವನಂತೆ, ಬೆಂಗಳೂರಿನಲ್ಲೇ ಎಂ.ಬಿ.ಬಿ.ಎಸ್ ಮಾಡಿದ್ದಂತೆ, ಫ್ಯಾಮಿಲಿ ಫ್ರೆಂಡ್ಸ್ ಅಂತೆ, ಮದುವೆ ಮುಂದಿನ ತಿಂಗಳು ಬೆಂಗಳೂರಿನಲ್ಲಂತೆ, ಖಂಡಿತ ಬರಬೇಕಂತೆ, ಪಿ.ಜಿ.ಯನ್ನು ಅಮೇರಿಕದಲ್ಲೇ ಮಾಡುತ್ತಾಳಂತೆ, ಇನ್ನೂ ತುಂಬಾ ಜನರಿಗೆ ಕಾರ್ಡು ಕೊಡಬೇಕಂತೆ…ಎಂದೆಲ್ಲ ಹೇಳಿ ಪ್ರೇಮಾ ಹೊರಟು ಹೋದಳು. 

ಅಮರ ಕಾರ್ಡನ್ನು ಹಿಡಿದು ಏನೂ ತೋಚದೇ ನಿಂತುಬಿಟ್ಟ. ಕಾರ್ಡಿನ ಮೇಲಿನ ಪ್ರೇಮಾಳ ಹೆಸರಿನ ಪಕ್ಕದಲ್ಲಿ ಇರುವ `ಡಾ. ರಾಜಶೇಖರ ಕೃಷ್ಣೇಗೌಡ` ಎನ್ನುವ ಹುಡುಗನ ಹೆಸರನ್ನು ಬೆರಳಿನಿಂದ ಮುಚ್ಚಿ, ಲಗ್ನಪತ್ರಿಕೆಯನ್ನು ಮುಖದ ಹತ್ತಿರ ತಂದು, `ಪ್ರೇಮಾ` ಎನ್ನುವ ಹೆಸರಿನ ಮೇಲೆ ಒಂದು ಸಲ ತುಟಿ ಆಡಿಸಿದ, ಮೂಗಿಗೆ ಘಮ್ಮೆಂದು ಲಗ್ನಪತ್ರಿಕೆಯ ವಾಸನೆ! 

***

ಅದೇ ವಾಸನೆ! ತನ್ನ ಲಗ್ನಪತ್ರಿಕೆಗೂ ಅದೇ ವಾಸನೆ! ಅದಕ್ಕೇ ಪ್ರೇಮಾಳ ನೆನಪಾದದ್ದು. ಅದಕ್ಕೇ ಪ್ರೇಮಾಳನ್ನು ನೋಡುವ ಆಸೆ ಮೂಡಿದ್ದು ಎಂದು ಅಮರ ತನಗೆ ತಾನೇ ಸಮಾಧಾನ ಮಾಡಿಕೊಂಡು, ತನ್ನ ಮತ್ತು ಉಷಾಳ ಲಗ್ನಪತ್ರಿಕೆಗಳನ್ನು ಹಿಡಿದುಕೊಂಡು ಪ್ರಿಂಟಿಂಗ್ ಪ್ರೆಸ್ಸಿನಿಂದ ಹೊರಬಂದ. 

ಆದರೆ ದಿನ ಕಳೆದಂತೆ ಅಮರನಿಗೆ ಪ್ರೇಮಾಳನ್ನು ನೋಡಬೇಕು ಎನ್ನುವ ಆಸೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಹೋಯಿತು. ತನ್ನ ನಿಶ್ಚಿತಾರ್ಥ ಆಗಿದೆ, ತನ್ನ ಭಾವಿ ಪತ್ನಿ ಉಷಾ, ತಾನು ಅವಳ ಪ್ರೀತಿಯಲ್ಲಿ ಮುಳುಗಿ ಹೋಗಿದ್ದೇನೆ. ಅತ್ತ ಪ್ರೇಮಾ ಮದುವೆಯಾಗಿ ದೂರದ ಅಮೇರಿಕಕ್ಕೆ ಹೋಗಿದ್ದಾಳೆ. ಅಂಥದರಲ್ಲಿ ಪ್ರೇಮಾಳನ್ನು ನೋಡಬೇಕು ಎನ್ನುವ ಆಸೆ ಪದೇ ಪದೇ ಮೂಡಿದ್ದಕ್ಕೆ ತನ್ನ ಬಗ್ಗೆ ತನಗೇ ಕಳವಳವಾಯಿತು. ಅವಳ ಮದುವೆಗೆ ಹೋಗಿದ್ದರೆ ಬಹುಷಃ ಇಂಥ ಹುಚ್ಚು ಆಸೆ ಮೂಡುತ್ತಿರಲಿಲ್ಲ ಎನಿಸಿತು. ಅವಳ ಹತ್ತಿರ ಮಾತಾಡಿ ಅವಳಿಗೆ ಈಗ ಆಗುತ್ತಿರುವ ತನ್ನ ಮದುವೆಯ ಬಗ್ಗೆ ಹೇಳಿದರೆ ಈ ಭ್ರಾಂತಿ ಕಳೆಯಬಹುದು ಎನಿಸಿತು.

ಎಂ.ಬಿ.ಬಿ.ಎಸ್ ಬೀಳ್ಕೊಡುಗೆ ಸಮಾರಂಭದಲ್ಲಿ ಎಲ್ಲರ ಹೆಸರು, ಜನ್ಮದಿನಾಂಕ ಮತ್ತು ಮನೆಯ ಫೋನ್ ನಂಬರ್ ಇರುವ ಒಂದು ಚಿಕ್ಕ ಹೊತ್ತಿಗೆಯನ್ನು ಎಲ್ಲರಿಗೆ ಕೊಟ್ಟಿದ್ದರು. ಆಗಿನ್ನೂ ಮೊಬೈಲು, ಇ-ಮೇಲು ಇರಲಿಲ್ಲವಲ್ಲ. ಅದರಲ್ಲಿ ಹುಡುಕಿ ಪ್ರೇಮಾಳ ಬೆಂಗಳೂರಿನ ಮನೆಗೆ ಎಸ್.ಟಿ.ಡಿ ಬೂತಿನಿಂದ ಫೋನ್ ಮಾಡಿದ. ಪ್ರೇಮಾಳ ಅಮ್ಮ ಫೋನ್ ಎತ್ತಿಕೊಂಡರು. 

`ಓ ಅಮರನಾ? ಪ್ರೇಮಾ ನಿನ್ನ ಬಗ್ಗೆ ಯಾವಾಗಲೂ ಹೇಳುತ್ತಿರುತ್ತಾಳಪ್ಪಾ. ಏನು? ನಿನ್ನ ಮದುವೆನೇನಪ್ಪಾ? ತುಂಬ ಸಂತೋಷ ಆಯ್ತಪ್ಪಾ! ಅವಳು ಅಮೇರಿಕದಿಂದ ಫೋನ್ ಮಾಡಿದಾಗ ಪ್ರೇಮಾಗೂ ಹೇಳ್ತೀನಪ್ಪಾ. ಅವಳಿಗೂ ತುಂಬ ಸಂತೋಷ ಆಗುತ್ತಪ್ಪಾ` ಎಂದು ಬಿಡದೇ ಮಾತಾಡಿದರು. 

ಪ್ರೇಮಾಳ ಅಮೇರಿಕದ ನಂಬರು ಕೇಳಬೇಕು ಎಂದುಕೊಂಡವನು ಕೇಳದೇ ಹಾಗೆಯೇ ಫೋನು ಇಟ್ಟುಬಿಟ್ಟ. 

(ಮುಂದುವರೆಯುವುದು…)