ಕನ್ನಡ ಬಳಗ ದೀಪಾವಳಿ/ರಾಜ್ಯೋತ್ಸವ ನವೆಂಬರ್ ೨೦೨೫: ಅನಿವಾಸಿಯಿಂದ ಭೈರಪ್ಪನವರಿಗೆ ಶ್ರದ್ಧಾಂಜಲಿ

ಕನ್ನಡ ಬಳಗ, ಮಿಲ್ಟನ್ ಕಿನ್ಸ್ ನ ಅನಿಕೇತನ ಸಂಸ್ಥೆಯ ಜೊತೆ ಕೈ ಗೂಡಿಸಿ, ನವೆಂಬರ್ ೮ ರಂದು ದೀಪಾವಳಿ ಹಾಗು ರಾಜ್ಯೋತ್ಸವಗಳನ್ನು ಆಚರಿಸಿತು. ಕನ್ನಡ ಬಳಗದ ಕಾರ್ಯಕ್ರಮಗಳಲ್ಲಿ ‘ಅನಿವಾಸಿ’ ಯ ಸಮಾನಾಂತರ ಸಭೆ ಈಗ ಸಂಪ್ರದಾಯವೇ ಆಗಿದೆ. ಹೆಚ್ಚಾಗಿ, ಮುಖ್ಯ ಕಾರ್ಯಕ್ರಮದ ಉದ್ಘಾಟನೆ ಹಾಗೂ ಹಿತನುಡಿಗಳ ನಂತರದ ಸಮಯ ಇದಕ್ಕಾಗೇ ಮೀಸಲು. ಇತ್ತೀಚಿಗೆ ಕಾಣದ ಲೋಕಕ್ಕೆ ತೆರಳಿದ ಭೈರಪ್ಪನವರ ಅಗಲಿಕೆ ಕನ್ನಡಿಗರಿಗೆ ಅತೀವ ದುಃಖದಾಯಕ ಕಾರಣವಾಗಿದೆ. ಕನ್ನಡದ ಮಹಾನ್ ಕಾದಂಬರಿಕಾರರಲ್ಲಿ ಒಬ್ಬರಾದ ಭೈರಪ್ಪನವರಿಗೆ ಶ್ರದ್ಧಾಂಜಲಿ ಅರ್ಪಿಸುವುದೇ ಈ ಬಾರಿಯ ಅನಿವಾಸಿ ಕಾರ್ಯಕ್ರಮಕ್ಕೆ ತಕ್ಕುದಾದ ವಿಷಯವೆಂದು ಮೊದಲೇ ತೀರ್ಮಾನವಾಗಿತ್ತು. ಸದಸ್ಯರು ತಮಗೆ ಇಷ್ಟವಾದ ಕಾದಂಬರಿಯ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುವುದು ಮೊದಲ ಭಾಗ. ಮುಖ್ಯ ಅತಿಥಿಯಾಗಿ ಬರುವ ಶ್ರೀ. ಮತ್ತೂರು ನಂದಕುಮಾರರಿಂದ ಅವರ- ಭೈರಪ್ಪನವರ ಒಡನಾಟದ ವಿಶಿಷ್ಟ ಅನುಭವಗಳ ಅವಲೋಕನೆ ಎರಡನೇ ಭಾಗದಲ್ಲಿ ಎಂದು ನಿಶ್ಚಯಿಸಿದ್ದೆವು. ಕಾರ್ಯಕ್ರಮದ ಮುಖ್ಯ ಸಂಘಟಕರಾದ ಆನಂದ್ ಕೇಶವಮೂರ್ತಿ ಹಾಗೂ ಅನ್ನಪೂರ್ಣ ಆನಂದ್, ಮುಖ್ಯ ಅತಿಥಿಯವರ ಅನುಮೋದನೆ ಪಡೆದು ಯೋಜನೆಯನ್ನು ಕಾರ್ಯಗತಗೊಳಿಸಿದರು. ಈ ಸಂಚಿಕೆಯಲ್ಲಿ ಕಾದಂಬರಿಗಳ ವಿಶ್ಲೇಷಣೆ ಹಾಗೂ ಮತ್ತೂರರ ಭಾಷಣವದ ವಿವರಗಳಿವೆ. ಜೊತೆಯಲ್ಲೇ ಆತಿಥೇಯ ನಗರ ಮಿಲ್ಟನ್ ಕೀನ್ಸ್ ನವರೇ ಆದ ನಾಗರಾಜ ಬಸವರಾಜು ಅವರು ಬರೆದ ಇಡೀ ದಿನದ ಕಾರ್ಯಕ್ರಮಗಳ ವರದಿಯೂ ಇದೆ. ಕೊನೆಯಲ್ಲಿ ಡಾ . ಶ್ರೀವತ್ಸ ದೇಸಾಯಿ ಅವರು ಚಿತ್ರೀಕರಿಸಿದ ಕಾರ್ಯಕ್ರಮದ ಮುಖ್ಯಾಂಶಗಳ ಚಿಕ್ಕ ವಿಡಿಯೋವನ್ನು ನೋಡಲು ಮರೆಯದಿರಿ. -ರಾಮಶರಣ ಲಕ್ಷ್ಮೀನಾರಾಯಣ

ಎಲ್ಲರನ್ನು ಸ್ವಾಗತಿಸಿ, ಕಾರ್ಯಕ್ರಮದ ಪರಿಚಯವನ್ನು ಆನಂದ್ ಮಾಡಿಕೊಟ್ಟರು. ಮುಖ್ಯ ಅತಿಥಿಗಳ ಪರಿಚಯವನ್ನು ಶ್ರೀವತ್ಸ ದೇಸಾಯಿಯವರು ನೆರವೇರಿಸಿದರು. ಕೊನೆಯಲ್ಲಿ ಜಿ.ಎಸ್.ಶಿವಪ್ರಸಾದ್ ಸಾಂಗವಾಗಿ ಆಭಾರ ಮನ್ನಿಸಿದರು. 

ಪರ್ವ: ಸಾರ್ವಕಾಲಿಕ ನೆಚ್ಚಿನ ಕಾದಂಬರಿ – ಅನ್ನಪೂರ್ಣ ಆನಂದ್ 

ಚಿತ್ರಕೃಪೆ : ಕೇಶವ ಕುಲಕರ್ಣಿ

ಹೈಸ್ಕೂಲಿನಿಂದ ಕಾದಂಬರಿ ಓದುವ ಗೀಳು ಹತ್ತಿತ್ತು. ನನಗೆ ಮೊದಲು ಸಿಕ್ಕಿದ ಭೈರಪ್ಪನವರ ಕಾದಂಬರಿ ‘ವಂಶವೃಕ್ಷ’. ಅವರ ಬರಹದ ಶೈಲಿ, ಪಾತ್ರ ಪೋಷಣೆ, ಕಥೆಯ ಹಂದರ ನನ್ನ ಮನತಟ್ಟಿದವು. ‘ಧರ್ಮಶ್ರೀ’ ಹಾಗು ‘ದೂರಸರಿದರು’ ಗಳ ನಂತರ ಕೈಗೆಟುಕಿದ್ದು ‘ಪರ್ವ’. ಭಾರತೀಯ ಮಕ್ಕಳೆಲ್ಲ ಮಹಾಭಾರತದ ಕಥೆಗಳನ್ನು ಓದಿ, ಕೇಳಿಯೇ ಬೆಳೆಯುತ್ತಾರೆ. ಮಂತ್ರ ಪ್ರಭಾವದಿಂದ ಮಕ್ಕಳಾಗುವುದು, ಗಾಂಧಾರಿ ಹೊಟ್ಟೆ ಕಿವುಚಿಕೊಂಡು ನೂರು ಮಕ್ಕಳನ್ನು ಪಡೆಯುವುದು, ಕೃಷ್ಣನ ಚಮತ್ಕಾರಗಳು, ಇವೆಲ್ಲ ಕಲ್ಪನೆಗೆ ಮೀರಿದ ವಿಚಿತ್ರ ಭಾವನೆಗಳನ್ನು ಮೂಡಿಸುತ್ತಿದ್ದವು. ‘ಪರ್ವ’ ಮಹಾಭಾರತದ ಪಾತ್ರಗಳನ್ನೆಲ್ಲ ಮಾನವ ಸದೃಶಗೊಳಿಸುತ್ತವೆ. ಇಲ್ಲಿ ಚಮತ್ಕಾರಗಳಿಲ್ಲ. ಕೃಷ್ಣ, ಚಾಣಾಕ್ಷನೂ, ಮುತ್ಸದ್ದಿಯೂ ಆದ ವ್ಯಕ್ತಿ. ಕಥೆಯೂ  ಅಂತಃ ಸಂವಾದ, ಕೆದಕಿದ ನೆನಪು, ಪ್ರತಿಕ್ರಿಯೆಯ ರೂಪದಲ್ಲಿ ಸಾಗುವುದರಿಂದ, ಪುರಾಣವಾಗದೇ ಒಂದು ಐತಿಹಾಸಿಕ ಕಥೆಯಾಗಿ ಅನಾವರಣಗೊಳ್ಳುತ್ತದೆ. ಕುರುಕ್ಷೇತ್ರ ಯುದ್ಧ ವೈಭವೀಕರಣಗೊಳ್ಳದೇ ಕೊಳೆತು ನಾರುವ ಹೆಣದ ರಾಶಿ, ಯುದ್ಧ ತರುವ ಗೋಳು, ಹೊಲಸು ಇವನ್ನೆಲ್ಲ ತೋರುತ್ತ ಜಿಗುಪ್ಸೆ ಹುಟ್ಟುವಂತೆ ಮಾಡುತ್ತದೆ. ಸ್ತ್ರೀಪಾತ್ರಗಳಿಗೆ ಇಲ್ಲಿ ಪುರುಷ ಪಾತ್ರಗಳಿಗಿಂತಲೂ ಹೆಚ್ಚಿನ ಪ್ರಾಮುಖ್ಯತೆ ಇದೆ. ದ್ರೌಪದಿಯ ಪ್ರತೀಕಾರ, ಕುಂತಿಯ ಆಂತರಿಕ ತಲ್ಲಣ, ಗಾಂಧಾರಿಯ ಮಾತೃತ್ವದ ಬಂಧನ ಮನತಟ್ಟುತ್ತವೆ. ‘ಪರ್ವ’ ವನ್ನು ನಾನು ಹಲವು ಬರಿ ಓದಿದ್ದೇನೆ; ಪ್ರತಿಸಲವೂ ಹೊಸತನ್ನು ಕಂಡಿದ್ದೇನೆ. ಭೈರಪ್ಪನವರ ಕಾದಂಬರಿಗಳಲ್ಲೆಲ್ಲ ಇದು ನನ್ನ ಸಾರ್ವಕಾಲಿಕ ನೆಚ್ಚಿನ ಕೃತಿ.   

ಧರ್ಮಶ್ರೀ: ೬೦ರ ಭಾರತದ ಚಿತ್ರಣ – ಆನಂದ್ ಕೇಶವಮೂರ್ತಿ 

ನಾನು ‘ಧರ್ಮಶ್ರೀ’ಯನ್ನು ಮೊದಲ ಬಾರಿಗೆ ಓದಿದ್ದು ೩೫-೪೦ ವರ್ಷಗಳ ಹಿಂದೆ. ಕಳೆದ ವಾರ ಮತ್ತೊಮ್ಮೆ ಓದಿದಾಗ ಕಂಡದ್ದು ಹಲವು ಹೊಸ ವಿಷಯಗಳು. ೧೯೬೧ ರಲ್ಲಿ ಈ ಕೃತಿ ಬೆಳಕು ಕಂಡಿತು. ಹಾಗಾಗಿ ಇದನ್ನು ಭೈರಪ್ಪನವರು ೧೯೫೯ ಅಥವಾ ೧೯೬೦ರಲ್ಲಿ ಬರೆದಿರಬಹುದು. ಆಗ ಅವರಿಗೆ ೩೦ರ ಹರೆಯ. ಅಷ್ಟು ಚಿಕ್ಕ ವಯಸ್ಸಿನಲ್ಲೇ ಅವರು ಎಷ್ಟೊಂದು ಓದಿದ್ದರು, ಪ್ರೌಢಿಮೆ ಹೊಂದಿದ್ದರು ಎಂಬ ವಿಷಯ ಈ ಕಾದಂಬರಿಯನ್ನು ಓದಿದಾಗ ಅನಿಸುತ್ತದೆ. ೬೦ರ ದಶಕದ ಸಾಮಾಜಿಕ ಬದುಕು, ಕಿತ್ತು ತಿನ್ನುವ ಬಡತನ, ಹಿಂದೂ ಧರ್ಮದಲ್ಲಿ ತಂಡವವಾಡುತ್ತಿದ್ದ ಜಾತೀಯತೆ ಇವನ್ನೆಲ್ಲ ಧರ್ಮಶ್ರೀ ಪ್ರತಿಫಲಿಸುತ್ತದೆ. ಕಾದಂಬರಿಯ ಮೊದಲ ಪುಟಗಳು ಭೈರಪ್ಪನವರ ಮೈಸೂರಿಗೆ ವಿದ್ಯಾಭ್ಯಾಸಕ್ಕೆ ಬರುವವರೆಗಿನ ಆತ್ಮ ಕಥೆಯೇ ಎಂದು ತಮ್ಮ ‘ಭಿತ್ತಿ’ ಆತ್ಮಕಥೆಯಲ್ಲಿ ಹೇಳಿಕೊಂಡಿದ್ದಾರೆ. ಹಿಂದೂ ಕಥಾನಾಯಕ ಕ್ರಿಸ್ತ ಧರ್ಮಕ್ಕೆ ಮತಾಂತರ ಹೊಂದಿದ ಮೇಲೆ ಅವನಿಗಾಗುವ ತಳಮಳ, ಅದರ ಪರಿಣಾಮಗಳು ಇದರಲ್ಲಿ ಮನಮುಟ್ಟುವಂತೆ ಚಿತ್ರಿತವಾಗಿವೆ. ರಾಷ್ಟೀಯ ಸ್ವಯಂ ಸೇವಕ ಸಂಘದ ಧ್ಯೇಯೋದ್ದೇಶ, ಸಂಘವನ್ನು ಹತ್ತಿಕ್ಕಲು ಅಂದಿನ ಸರಕಾರ ಮಾಡಿದ ಪ್ರಯತ್ನಗಳು ಇದರಲ್ಲಿವೆ. ಕ್ರಿಶ್ಚಿಯನ್ ಮಿಷನರಿಗಳು ಶೋಷಿತರನ್ನು ಗುರಿಯಾಗಿಸಿಕೊಂಡು, ಆಮಿಷಗಳನ್ನೊಡ್ಡಿ ಮತಾಂತರಗೊಳಿಸುತ್ತಿದ್ದ ಬಗೆ; ಸಮಾನ ಅಂತಸ್ತಿನ ಭರವಸೆ ನೀಡಿದರೂ ಶೋಷಿತರನ್ನು ಶೋಷಿಸುತ್ತಲೇ ಇದ್ದ ಸಂಗತಿಗಳನ್ನು ವಿವರಿಸುತ್ತಾರೆ. ದಿಸ್ತೀನ್ ಗೌಡನ ಪಾತ್ರದ ಮೂಲಕ ಧಾರ್ಮಿಕ ವ್ಯವಸ್ಥೆಯ ಕೊರತೆಗಳನ್ನು ಎತ್ತಿ ತೋರಿಸುತ್ತಾರೆ. ಈ ಕಾದಂಬರಿ ೬೦ರ ದಶಕದ ಸಮಾಜ ವ್ಯವಸ್ಥೆಯ ಅಧ್ಯಯನ, ಧಾರ್ಮಿಕ ಶೋಷಣೆಗೆ ಹಿಡಿಯುವ ಕೈಗನ್ನಡಿ ಎಂದು ಹೇಳಬಹುದು. 

ಮತದಾನ ಹಾಗೂ ಇತರ ಕಾದಂಬರಿಗಳು: ಹಾಜರಿ ಕಡಿಮೆಯಾಗಲು ಕಾರಣೀಭೂತ – ವಿನಯ್ ರಾಯಚೂರ್ 

ಭೈರಪ್ಪನವರ ಕಾದಂಬರಿಗಳು ನನ್ನನ್ನು ಎಷ್ಟು ಆಕರ್ಷಿಸಿದ್ದವೆಂದರೆ, ನಾನು ಕ್ಲಾಸಿಗೆ ಹೋಗದೇ ಪಟ್ಟಾಗಿ ಕುಳಿತು ಮುಗಿಸುತ್ತಿದ್ದೆ. ನನ್ನ ಹಾಜರಿ ಕಡಿಮೆಯಾಗಲು ಇವೇ ಮೂಲ ಕಾರಣ. ಅವರ ಎಲ್ಲ ಕಾದಂಬರಿಗಳನ್ನು ಓದಿದ್ದೇನೆ. ‘ಮತದಾನ’ ಇಷ್ಟವಾಗುವುದಕ್ಕೆ ಮೂರೂ ಕಾರಣಗಳಿವೆ: ಚಿಕ್ಕದಾದರೂ ಚೊಕ್ಕದು ಈ ಕೃತಿ; ಆದರ್ಶಕ್ಕೆ ಜೋತು ಬಿದ್ದರೆ ಬದುಕು ಸಾಗದು; ರಾಜಕೀಯ ಎಂದಿಗೂ ಹೊಲಸೇ ಎನ್ನುವುದನ್ನು ಸಾಬೀತು ಮಾಡುತ್ತದೆ. ‘ಗೃಹಭಂಗ’ ದಲ್ಲಿ ಸಂಘರ್ಷದ ಬದುಕಿನ ಚಿತ್ರಣದ ಜೊತೆಗೆ, ಅಂತಹ ಅನುಭವಕ್ಕೆ ಒಳಗಾದವರಿಗೆ ಸಾಂತ್ವನ ಹೇಳುವ ಧ್ವನಿಯಿದೆ. ಭೈರಪ್ಪನವರ ಕಾದಂಬರಿಗಳಲ್ಲಿ ತತ್ವಶಾಸ್ತ್ರದ ಹೊಳವು ಸರ್ವೇ ಸಾಮಾನ್ಯ. ‘ಸಾಕ್ಷಿ’ ಹಾಗೂ ‘ನಾಯಿ ನೆರಳು’ ಇವೆರಡರಲ್ಲಿ ಆಧ್ಯಾತ್ಮಿಕತೆ, ತತ್ವಶಾಸ್ತ್ರಗಳ ಪ್ರಭಾವವನ್ನು ದಟ್ಟವಾಗಿ ಕಾಣಬಹುದು. ಪುನರ್ಜನ್ಮದ ಜಿಜ್ಞಾಸೆ ಕೂಡ ನಾಯಿನೆರಳಿನಲ್ಲಿ ತೀವ್ರವಾಗಿದೆ. ಅವರ ಯಾವುದೇ ಕಾದಂಬರಿಗಳಲ್ಲಿ ಅಂತಿಮ ನಿಷ್ಕರ್ಷ ಕಾಣ ಬರುವುದಿಲ್ಲ. ಓದುಗರ ಊಹೆಗೆ, ಚರ್ಚೆಗೆ ಅವು ತೆರೆದುಕೊಳ್ಳುತ್ತವೆ. ಅವರ ಕಾದಂಬರಿಗಳಿಂದ ಪ್ರೇರಿತನಾಗಿ, ನಾನು ತತ್ವಶಾಸ್ತ್ರ, ವೈಚಾರಿಕತೆ ಇವನ್ನೆಲ್ಲ ಇನ್ನು ಹೆಚ್ಚಾಗಿ ಅರಿಯುವ ಪ್ರಯತ್ನ ಮಾಡಿದ್ದೇನೆ. 

ಉತ್ತರಕಾಂಡ: ಭೈರಪ್ಪನವರ ಕೊನೆಯ ಕಾದಂಬರಿ – ಕೇಶವ ಕುಲಕರ್ಣಿ 

‘ಪರ್ವ’ದಲ್ಲಿ ಮಹಾಭಾರತವನ್ನು ಬರೆದ ಭೈರಪ್ಪನವರು, ‘ಉತ್ತರಕಾಂಡ’ದಲ್ಲಿ ರಾಮಾಯಣವನ್ನು ಬರೆದದ್ದು ೪೦ ವರ್ಷಗಳ ನಂತರ. ಭಾರತದ ಉದ್ದಗಲಕ್ಕೂ ಗದ್ಯ ಹಾಗೂ ಕಾವ್ಯದ ರೂಪದಲ್ಲಿ ನೂರಾರು ರಾಮಾಯಣಗಳ ಆವೃತ್ತಿಗಳನ್ನು ಕಾಣಬಹುದು. ಪಾಶ್ಚಾತ್ಯ ಶಿಕ್ಷಣದ ಪ್ರಭಾವ ಆಗುವವರೆಗೂ ರಾಮ ದೈವಾಂಶ ಸಂಭೂತನಾಗಿದ್ದ. ಆಧುನಿಕ ಕಾಲದಾರಂಭದಲ್ಲಿ ಪುರುಷೋತ್ತಮನಾದ. ವಿಚಾರವಾದ, ಹೊಸ ಸಿದ್ಧಾಂತಗಳ ಪ್ರಭಾವದಲ್ಲಿ ರಾಮಾಯಣವನ್ನು ವಿಭಿನ್ನ ದೃಷ್ಟಿಕೋನಗಳಿಂದ ನೋಡಲಾಗಿದೆ. ಪೌರಾಣಿಕ ನೋಟದಿಂದ ಹೊರತಾಗಿ, ಐತಿಹಾಸಿಕ ಅಥವಾ ಸಮಕಾಲೀನ ಕಥಾನಕದಂತೆ ಕಂಡವರಿದ್ದಾರೆ. ಕನ್ನಡದಲ್ಲೇ ಪೋಲಂಕಿ ರಾಮಮೂರ್ತಿಯವರು ‘ಸೀತಾಯಣ’ ಬರೆದು ಸಾಕಷ್ಟು ಚರ್ಚೆಗೊಳಗಾಗಿದ್ದರು. 

ಉತ್ತರಕಾಂಡದ ವೈಶಿಷ್ಟ್ಯತೆಯೆಂದರೆ, ಕಥೆ ಪ್ರಾರಂಭವಾಗುವುದೇ ಲವ-ಕುಶ ರ ಜನ್ಮವಾದನಂತರ. ರಾಮಾಯಣವು ಇಲ್ಲಿ ಸೀತೆಯ ಸ್ವಗತದಲ್ಲಿ rewind ಆಗುತ್ತದೆ. ‘ಪರ್ವ’ದಂತೆ ಇಲ್ಲಿನ ಪಾತ್ರಗಳೆಲ್ಲ ಮಾನವೀಕೃತಗೊಂಡಿವೆ. ಸೀತೆಯ ದೃಷ್ಟಿಕೋನದಿಂದ ಭೈರಪ್ಪ ರಾಮನನ್ನು ‘ಕಟ್ಟುತ್ತ’ ಹೋಗುತ್ತಾರೆ. ರಾಜನಾಗಿ ಗೆಲ್ಲುವ ರಾಮ, ಗಂಡನಾಗಿ ಸೋಲುತ್ತಾನೆ. ಅವರು ಈ ಕೃತಿಯಲ್ಲಿ ಸಾಕಷ್ಟು ಕಥೆಗಾರನ ಸ್ವಾತಂತ್ರ್ಯವನ್ನು ಬಳಸಿದ್ದಾರೆ. ಇದನ್ನು ಓದಿದಾಗ, ಭೈರಪ್ಪನವರು ಸಾಹಿತ್ಯ ಓದುಗರ ಕಟ್ಟುಪಾಡನ್ನು ಮೀರಿ ಒಳಗಾಗದೇ ಪಂಥ ಮೀರಿ ಬರೆದದ್ದನ್ನು ಗುರುತಿಸಬಹುದು. ಕೊನೆಯಲ್ಲಿ ವಾಲ್ಮೀಕಿ “ಈ ಕಥೆಗೆ ಸುಖಾಂತವನ್ನೊದಗಿಸಲೆಂದು ಅಯೋಧ್ಯೆಗೆ ಹೋಗಿ ಧರ್ಮಸಭೆ ಏರ್ಪಡಿಸಿದೆ. ಆದರೂ ಕಥೆಯ ದಿಕ್ಕನ್ನು ಬದಲಾಗಿಸಲಾಗಲಿಲ್ಲ” ಎಂದು ಸೋಲೊಪ್ಪಿಕೊಳ್ಳುತ್ತಾನೆ. 

ಈ ಕಾದಂಬರಿ, ಭೈರಪ್ಪನವರ ಒಳ್ಳೆಯ ಕಾದಂಬರಿ ಎಂದು ನನಗೆನ್ನಿಸುವುದಿಲ್ಲ; ಇದು ಅಷ್ಟಾಗಿ ಚರ್ಚೆಗೋ, ವಿಮರ್ಶೆಗೋ ಒಳಗೊಳ್ಳಲಿಲ್ಲ. 

ಮಂದ್ರ, ಹೆಸರೇ ಸೂಚಿಸುವಂತೆ ಸಂಗೀತದ ತಳಹದಿಯ ಮೇಲೆ ನಿಂತ ಕೃತಿ. ಮುಖ್ಯ ಪಾತ್ರದಾರಿ ಮೋಹನಲಾಲ, ಅಪ್ರತಿಮ ಪ್ರತಿಭೆಯ ಸಂಗೀತಗಾರ. ಹರಿದ್ವಾರ ಘಾಟಿಯಿಂದ ಮುಂಬಯಿಯ ಶಾಸ್ತ್ರೀಯ ಸಂಗೀತ ಲೋಕದ ಮಹಾನ್ ತಾರೆಯಾಗಿ ಬೆಳಗಿದವ. ಆತನ ಬೆಳವಣಿಗೆಯ ಮೂಲಕ ಭೈರಪ್ಪನವರು ಹಿಂದೂಸ್ತಾನಿ ಸಂಗೀತದ ಒಳ ನೋಟದ ಪರಿಚಯ ಮಾಡಿಕೊಡುತ್ತಾರೆ. ಇಲ್ಲಿ ಗುರು-ಶಿಷ್ಯ ಪರಂಪರೆಯ ಚಿತ್ರಣವಿದೆ; ಘರಾಣೆಗಳ ವಿವರವಿದೆ. ಹಲವು ರಾಗಗಳ ವಿವರ, ರಾಗಗಳ ರಸ, ಸಂಗೀತಗಾರ ಹೇಗೆ ಸ್ವರಗಳ ಹಂದರದಲ್ಲಿ ಸ್ವಯಂ ರಸಾಸ್ವಾಧನೆ ಮಾಡುತ್ತ, ಶ್ರೋತೃಗಳಿಗೂ ಉಣಬಡಿಸುತ್ತಾನೆ ಎಂದು ತೋರಿಸುತ್ತಾರೆ. ಜೊತೆಗೇ, ಕಲಾವಿದರ ನಡುವಿನ ಈರ್ಷ್ಯೆ, ಅನಾರೋಗ್ಯಕರ ಸ್ಪರ್ಧೆ ಇವನ್ನೆಲ್ಲ ಕಾಣಬಹುದು. 

ಮೋಹನಲಾಲನ ವಿಷಯ ಲಂಪಟತನ, ಅವಕಾಶವಾದಿ ಮನೋಭಾವ ಸಂಗೀತಕ್ಕಿಂತಲೂ ಮುಖ್ಯವಾದ ವಸ್ತುವಾಗಿ ಕಾಣಬಹುದು. ಆತ ಮಧು ಷಾ ಎಂಬ ಶಿಷ್ಯೆಯನ್ನು ತನ್ನ ಆಪ್ತ ಶಿಷ್ಯೆಯೆಂದು ಕರೆಯುತ್ತ, ಸಂಗೀತದ ಸಂಪೂರ್ಣ ಜ್ಞಾನವನ್ನು ಕೊಡುವ ನೆಪದಲ್ಲಿ ಶೋಷಿಸುವುದನ್ನು ಓದಿದಾಗ, ಇತ್ತೀಚಿಗೆ ಸುದ್ದಿಯಾದ ಸಂಗೀತ ಲೋಕದ ಲೈಂಗಿಕ ಶೋಷಣೆಯ ಕಥೆಗಳ ನೆನಪಾಗುವುದು ಸಹಜ. ಮೋಹನಲಾಲ ತನ್ನ ವೃತ್ತಿ ಜೀವನದ ಮಧ್ಯದಲ್ಲೇ ಮನೋಹರಿ ದಾಸ್ ಎಂಬ ನರ್ತಕಿಯ ಹಿಂದೆ ಓಡಿ  ಹೋಗುತ್ತಾನೆ. ಆಕೆ ತನ್ನ ವೃತ್ತಿಯಲ್ಲಿ ಮುಂದೆಬರಲು ಪಟ್ಟ ಕಷ್ಟಗಳು, ಶೋಷಣೆಗೆ ಒಳಗಾದ ಸಂಗತಿಗಳು; ತದನಂತರ ಆಕೆಯೇ ಸಹ ನರ್ತಕರನ್ನು ಶೋಷಿಸುವ ಪ್ರಸಂಗಗಳು ಕಥೆಯನ್ನು ನೈಜವಾಗಿಡಲು ಸಹಕರಿಸುತ್ತವೆ. 

ಈ ಕಾದಂಬರಿಯಲ್ಲೂ, ಭೈರಪ್ಪನವರ ಇತರ ಕಾದಂಬರಿಗಳಂತೇ ಹಿಂದಿರುವ ಸಂಶೋಧನೆಯ ಆಳ, ವಿಷಯದ ಮೇಲಿರುವ ಹಿಡಿತ, ಪಾತ್ರಗಳು ತಂದಿಡುವ ನೈತಿಕ ಸಂಧಿಗ್ತತೆ ಗಹನವಾಗಿವೆ. ಸಂಗೀತ ಪ್ರಿಯರೆಲ್ಲ ಓದಬೇಕಾದ ಕೃತಿಯೆಂದು ನನ್ನ ಅನಿಸಿಕೆ.  

ಭೈರಪ್ಪನವರೊಡನೆ ಸಹಚಾರ: ಡಾ.ಮತ್ತೂರು ನಂದಕುಮಾರ್ 

ಚಿತ್ರಕೃಪೆ : ಕೇಶವ ಕುಲಕರ್ಣಿ

ಇಂದು ಅನಿವಾಸಿಯ ಸದಸ್ಯರು ಸುಂದರವಾಗಿ ಭೈರಪ್ಪನವರ ಕಾದಂಬರಿಗಳ ಬಗ್ಗೆ ವಿಶ್ಲೇಷಣೆ, ಅನಿಸಿಕೆಗಳನ್ನು ಹಂಚಿಕೊಂಡರು. ಭೈರಪ್ಪನವರು ನನಗೆ ಆತ್ಮೀಯರು. ಅವರು ಮಿತಭಾಷಿ. ಎಂದೂ ಜನರ ಗಮನದ ಕೇಂದ್ರದಿಂದ ದೂರವುಳಿಯುತ್ತಿದ್ದರು. ಅವರ ಪ್ರಥಮ ಭೆಟ್ಟಿ, ನಾನು ಮೈಸೂರಿನಲ್ಲಿ ವ್ಯಾಸಂಗಕ್ಕೆ ಅಣ್ಣನ ಮನೆಯಲ್ಲಿದ್ದಾಗ. ಅಲ್ಲಿ ನಡೆದ ಕಾರ್ಯಕ್ರಮಕ್ಕೆ ದಿನವೂ ಬಂದು ಕುಳಿತು, ಕೇಳಿ ಸದ್ದಿಲ್ಲದೇ ಮರೆಯಾಗುತ್ತಿದ್ದರು. ಎಲ್ಲವನ್ನೂ ಗಮನವಿಟ್ಟು ಕೇಳುತ್ತಿದ್ದರು, ನೋಡುತ್ತಿದ್ದರು. ಸ್ಪಂಜಿನಂತೆ ವಿಚಾರಗಳನ್ನು ಹೀರಿಕೊಳ್ಳುತ್ತಿದ್ದರು. ಸಾಮಾನ್ಯರೊಡನೆ ಸಾಮಾನ್ಯರಾಗಿ ಬೆರೆಯುತ್ತಿದ್ದರು. ಪ್ರವಾಸಕ್ಕೆ ಹೋದಾಗ ಸ್ಥಳಿಯರೊಂದಿಗೇ ಉಳಿದು, ಅಲ್ಲಿನ ಆಚಾರ, ವಿಚಾರ, ವೈಶಿಷ್ಟ್ಯತೆಗಳನ್ನು ಅರಿಯುವ ಪ್ರಯತ್ನ ಮಾಡುತ್ತಿದ್ದರೇ ಹೊರತು, ಹೊಟೇಲುಗಳಲ್ಲಿ ತಂಗಿ ನೀರ ಮೇಲಿನ ಕಮಲದ ಎಲೆಯಂತಿರುತ್ತಿರಲಿಲ್ಲ. ಮತ್ತೂರಿಗೆ ಬಂದಾಗ, ನಮ್ಮ ಮನೆಯಲ್ಲೇ ಅವರ ವಾಸ್ತವ್ಯ. ದಿನವೂ ಬೆಳಗ್ಗೆ ನನ್ನೊಡನೆ ಊರಿನ ಕೆರೆಯ ಸುತ್ತ ವಾಕಿಂಗ್ ಹೋಗಲೇ ಬೇಕಿತ್ತು. ಆಗ ಎದುರಾಗುವ ಜನರೊಡನೆ ಕಳೆಯುತ್ತಿದ್ದರು; ವಯಸ್ಸಿನ ಭೇದವಿಲ್ಲದೇ ಚರ್ಚೆ ಮಾಡುತ್ತಿದ್ದರು. ಲಂಡನ್ನಿಗೆ ಬಂದಾಗ ಕೂಡ ನಮ್ಮ ಮನೆಯಲ್ಲೇ ತಂಗುತ್ತಿದ್ದರು. ಆಗ ಅವರು ನನ್ನೊಡನೆ ನೀರನ್ನು ಯಾಕೆ ಪೋಲು ಮಾಡಬಾರದು ಎಂಬ ವಿಷಯವನ್ನು ವರ್ಣಿಸಿದ ನೆನಪು ಮನದಲ್ಲಿ ತೇವವಾಗಿಯೇ ಇದೆ. ದಿನವೂ ವಾಕಿಂಗ್ ಹೋದಾಗ ಹಲವಾರು ವಿಷಯಗಳ ಚರ್ಚೆ ಆಗುತ್ತಿತ್ತು. ಅವರು ಮಂದ್ರ ಬರೆಯುವ ಮೊದಲು ಬೇಕಿದ್ದ ಸಾಮಗ್ರಿಯನ್ನು ಕಲೆ ಹಾಕಲು ನಾನು ಸ್ವಲ್ಪ ಸಹಾಯ ಮಾಡಿದ್ದನ್ನು ಅವರು ಮುನ್ನುಡಿಯಲ್ಲಿ ಉಲ್ಲೇಖಿಸಿದ್ದು  ನನಗೆ ಹೆಮ್ಮೆಯ ಸಂಗತಿ – ಹೂವಿನೊಡನೆ ನಾರೂ ದೇವರ ಮುಡಿಗೇರಿದಂತೆ. ಅವರು ನಂಗೆ ತುಂಬಾ ಆತ್ಮೀಯರು. ಆತ್ಮೀಯರ ಬಗ್ಗೆ ಮಾತನಾಡುವಾಗ ಕಾಲ ಕಳೆದ ಅರಿವೇ ಇರುವುದಿಲ್ಲ.  ಇವತ್ತಿನ ಭೈರಪ್ಪನವರ ಸ್ಮರಣೆ ಅರ್ಥಪೂರ್ಣವಾಗಿದೆ. ಅವರನ್ನು ಓದಬೇಕು, ಓದಿ ಅವರ ನೆನಪನ್ನು ಹಸಿರಾಗಿಡಬೇಕು. 

ಆಂಗ್ಲನಾಡಿನಲ್ಲಿ ಕರುನಾಡ ಸೊಗಡು: ದೀಪಾವಳಿ ಹಾಗೂ ಕರ್ನಾಟಕ ರಾಜ್ಯೋತ್ಸವದ ಸಂಭ್ರಮ – ನಾಗರಾಜ ಬಸವರಾಜು

 ದೀಪಗಳ ಹಬ್ಬ ದೀಪಾವಳಿ ಮತ್ತು ನಮ್ಮೆಲ್ಲರ ಹೆಮ್ಮೆಯ ನಾಡಹಬ್ಬ ಕರ್ನಾಟಕ ರಾಜ್ಯೋತ್ಸವ — ಈ ಎರಡೂ ಹಬ್ಬಗಳು ಅನಿವಾಸಿ ಕನ್ನಡಿಗರಿಂದ ನವೆಂಬರ್ ೦೮, ೨೦೨೫ರಂದು ಮಿಲ್ಟನ್ ಕೀನ್ಸ್‌ನಲ್ಲಿ ಅದ್ಧೂರಿಯಾಗಿ ಆಚರಿಸಲ್ಪಟ್ಟವು. ದೂರದ ಬ್ರಿಟನ್ ನೆಲದಲ್ಲಿ, ಅನಿಕೇತನ ಮಿಲ್ಟನ್ ಕೀನ್ಸ್ (ಸ್ಥಳೀಯ ಸಮುದಾಯ ಸಂಸ್ಥೆ) ಮತ್ತು ೪೦ ವರ್ಷಗಳ ಸುದೀರ್ಘ ಇತಿಹಾಸವಿರುವ ಪ್ರತಿಷ್ಠಿತ ಕನ್ನಡ ಬಳಗ ಯು.ಕೆಯ ಸಹಭಾಗಿತ್ವದಲ್ಲಿ ನಡೆದ ಈ ಕಾರ್ಯಕ್ರಮವು ಕನ್ನಡಿಗರ, ಕರುನಾಡ ಕುಡಿಗಳ ಹೃದಯಗಳನ್ನು ಬೆಸೆದ ಬೃಹತ್ ಸಾಂಸ್ಕೃತಿಕ ಸೇತುವೆಯಾಗಿತ್ತು.

 ಆದಿಪೂಜಿತ ವಿನಾಯಕನ ಆರಾಧನೆಯೊಂದಿಗೆ, ಉಪಸ್ಥಿತರಿದ್ದ ಗೌರವಾನ್ವಿತ ಅತಿಥಿಗಳಾದ ಡಾ. ಎಂ. ಎನ್. ನಂದಕುಮಾರ್ ಹಾಗೂ ಗಾಯಕ ಶ್ರೀ ಸಂತೋಷ್ ವೆಂಕಿಯವರು ಎರಡೂ ಸಂಘ ಸಂಸ್ಥೆಗಳ ಅಧ್ಯಕ್ಷರು, ನಿರ್ದೇಶಕರ ಉಪಸ್ಥಿತಿಯಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. 

ನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ವಿದೇಶ ನೆಲದಲ್ಲಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ರೀತಿಯ ಆಚರಣೆಗಳು ಮೈಲಿಗಲ್ಲು. ಯುವ ಪೀಳಿಗೆಗೆ ನಮ್ಮ ನಾಡು-ನುಡಿಯ ಮಹತ್ವವನ್ನು ಸಾರುವ ಉದ್ದೇಶದಿಂದ ಆಯೋಜಿಸಲಾದ ಈ ಉತ್ಸವಕ್ಕೆ ಅಪಾರ ಸಂಖ್ಯೆಯ ಸ್ಥಳೀಯ ಕನ್ನಡಿಗರು ಹಾಗು ದೂರದೂರಿನ ಕನ್ನಡ ಬಳಗದ ಸದಸ್ಯರು ಕುಟುಂಬ ಸಮೇತ ಆಗಮಿಸಿ ಕರುನಾಡ ಸೊಗಡನ್ನು ಮೆರೆಸಿದರು. ಕಾರ್ಯಕ್ರಮದ ಗೌರವ ಅತಿಥಿ, ಡಾ. ಎಂ. ಎನ್. ನಂದಕುಮಾರ್ (ಕಾರ್ಯನಿರ್ವಾಹಕ ನಿರ್ದೇಶಕರು, ಭಾರತೀಯ ವಿಧ್ಯಾ ಭವನ, ಲಂಡನ್) ನೆರೆದವರನ್ನು ಉದ್ದೇಶಿಸುತ್ತ, ಈ ರೀತಿಯ ಕಾರ್ಯಕ್ರಮಗಳು ಮತ್ತು ಕನ್ನಡ/ಕರ್ನಾಟಕ ಕುರಿತಾದ ಕಾರ್ಯಕ್ರಮಗಳು ನಾಡಿನಿಂದ ದೂರದ ದೇಶದದಲ್ಲಿ ಬೆಳೆಯುತ್ತಿರುವ ಮಕ್ಕಳಿಗೆ ಸೇತುವೆಯಾಗಿ, ಕರ್ನಾಟಕ ಭಾಷೆಗಳ, ಕಲಾ ಸಂಸ್ಕೃತಿ ಪರಂಪರೆಗಳ ಪರಿಚಯವಾಗಿ, ಈ ಅಭಿರುಚಿಗಳ ಬೆಳವಣಿಗೆಗೆ ಪೂರಕವಾಗಿರಲಿ ಎಂದು ಆಶಿಸಿದರು.

 ಕಾರ್ಯಕ್ರಮದ ಪ್ರಮುಖ ಆಕರ್ಷಣೆ ಹಲವಾರು ಕಲಾವಿದರ ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನಗಳು. ಮಕ್ಕಳು, ಯುವಕರು ಮತ್ತು ಹಿರಿಯರು ಜಾನಪದ, ಶಾಸ್ತ್ರೀಯ ಸಂಗೀತ, ನೃತ್ಯ ಮತ್ತು ನಾಟಕಗಳ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಮಕ್ಕಳ ಛದ್ಮವೇಶ, ಜನಪದ ಹಾಗು ಸಿನಿಮಾ ನೃತ್ಯಗಳು, ವಯಸ್ಕರ ಗಾಯನ, ದಂಪತಿಗಳ ಜೋಡಿ ನೃತ್ಯ, ನವರಸ ರೂಪಕ, ರಾಮಾಯಣ ಸಂಗೀತ ನೃತ್ಯ ಹಾಗು ಕರುನಾಡ ವೈಭವ ಕುರಿತಾದ ಫಿನಾಲೆ ನೃತ್ಯ ಸಭಿಕರ ಮನ ಸೂರೆಗೊಂಡವು. ಪ್ರತಿಯೊಂದು ಪ್ರದರ್ಶನವೂ ಕನ್ನಡಿಗರ ಕಲಾಭಿರುಚಿ ಮತ್ತು ನಾಡಿನ ಸಂಸ್ಕೃತಿಯ ಶ್ರೀಮಂತಿಕೆಗೆ ಸಾಕ್ಷಿಯಾದವು. ದೀಪಾವಳಿಯ ಬೆಳಕು ಮತ್ತು ರಾಜ್ಯೋತ್ಸವದ ಕೆಂಪು-ಹಳದಿ ವರ್ಣಗಳು, ಎಲ್ಲರ ಸಾಂಪ್ರಾದಾಯಿಕ ಉಡುಗೆ ತೊಡುಗೆಗಳು ಹಾಗೂ ಅದಕ್ಕನುಗುಣವಾಗಿ ಒಳಾಂಗಣ ಅಲಂಕಾರಗಳು ಸಮಾರಂಭದ ಸಂಭ್ರಮವನ್ನು ಇಮ್ಮಡಿಗೊಳಿಸಿದ್ದವು.

ಸ್ಮರಣಾಂಜಲಿ: ಕನ್ನಡದ ದಿಗ್ಗಜರಿಗೆ ನಮನ

ಈ ವರ್ಷ ನಮ್ಮಿಂದ ದೂರವಾದ, ಈ ಹಿಂದೆ ಕನ್ನಡ ಬಳಗ ಯು ಕೆ ಗೆ ಆಹ್ವಾನಿತ ಅತಿಥಿಯಾಗಿ ಬಂದಿದ್ದ ನಾಡೋಜ ಡಾ. ಎಸ್. ಎಲ್. ಭೈರಪ್ಪ ಮತ್ತು ಕವಿ ಡಾ. ಎಚ್. ಎಸ್. ವೆಂಕಟೇಶಮೂರ್ತಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಅಲ್ಲದೆ, ಕನ್ನಡ ಬಳಗ ಯು.ಕೆಯ ಬೆಳವಣಿಗೆಗೆ ಶ್ರಮಿಸಿ, ಇತ್ತೀಚೆಗೆ ಅಗಲಿದ ಹಿರಿಯ ಸದಸ್ಯರ ಆತ್ಮಗಳಿಗೆ ಒಂದು ನಿಮಿಷದ ಮೌನ ಮತ್ತು ನುಡಿನಮನದ ಮೂಲಕ ಗೌರವ ಸಲ್ಲಿಸಲಾಯಿತು. ತಮ್ಮ ನೆಚ್ಚಿನ ಹಿರಿಯರನ್ನು ನೆನೆದು ಅನೇಕರು ಭಾವುಕರಾದರು.

ಬಹುಭಾಷಾ ಗಾಯಕ ಶ್ರೀಯುತ ಸಂತೋಷ್ ವೆಂಕಿ ಅವರ ಸಂಗೀತ ರಸಸಂಜೆ ಮೂಲಕ ನೆರೆದಿದ್ದ ಚಿಣ್ಣರು, ಯುವಕರು ಹಾಗೂ ಹಿರಿಯರೆಲ್ಲ ಕುಣಿದು ಕುಪ್ಪಳಿಸುವಂತೆ ಮಾಡಿದರು. ಈ ಕಾರ್ಯಕ್ರಮ ಕೇವಲ ಹಬ್ಬದ ಆಚರಣೆಯಾಗಿರದೆ, ಹೊರನಾಡ ಕನ್ನಡಿಗರು ತಮ್ಮ ಬೇರುಗಳನ್ನು ಗಟ್ಟಿಗೊಳಿಸಿಕೊಂಡು, ಹೊಸ ಪೀಳಿಗೆಗೆ ಕರುನಾಡ ವೈಭವಯುತ ಸಂಸ್ಕೃತಿಯ, ಪರಂಪರೆಯ ಮಹತ್ವವನ್ನು ತಿಳಿಸುವ ಶ್ಲಾಘನೀಯ ಪ್ರಯತ್ನವಾಯಿತು.

‘ಭೈರಪ್ಪನವರಿಗೆ ಶ್ರದ್ಧಾಂಜಲಿ’ ಕಾರ್ಯಕ್ರಮಕ್ಕೆ ನೆರೆದ ಸಭಿಕರು – ಚಿತ್ರಕೃಪೆ ಆನಂದ ಕೇಶವಮೂರ್ತಿ

ಎಚ್. ಎಸ್. ವೆಂಕಟೇಶಮೂರ್ತಿಯವರೊಡನೆ ಒಂದು ಆತ್ಮೀಯ ಸಂವಾದ- ಡಾ,ಪ್ರೇಮಲತ ಬಿ.

(ಯು. ಕೆ. ಕನ್ನಡ ಬಳಗದ ದೀಪಾವಳಿ ಸಂದರ್ಭದಲ್ಲಿ ಎಚ್. ಎಸ್. ವೆಂಕಟೇಶಮೂರ್ತಿ (HSV) ಅವರೊಡನೆ ಆತ್ಮೀಯ ಸಂವಾದವನ್ನು ಪ್ರೇಮಲತಾ ಅವರು ನಡೆಸಿಕೊಟ್ಟು ಸುಮಾರು  2 ವರ್ಷ ಕಳೆದಿವೆ. ಸಂವಾದ ಹಳೆಯದಾದರೂ ಅದು ತನ್ನ ಪ್ರಸ್ತುತತೆಯನ್ನು ಇನ್ನು ಉಳಿಸಿಕೊಂಡಿದೆ. ಇನ್ನು ಹಲವಾರು ವರ್ಷಗಳ ಬಳಿಕ ಓದಿದರೂ ಕೇಳಿದರೂ ಈ ಸಂವಾದ ಎಲ್ಲರ ಆಸಕ್ತಿ ಹಾಗೂ ಆಲೋಚನೆಯನ್ನು ಕೆರಳಿಸಬಹುದು. ಪ್ರೇಮಲತಾ ಅವರು ಕೇಳಿರುವ ಪ್ರಶ್ನೆಗಳು ಸಮರ್ಪಕವಾಗಿವೆ.

HSV ಅವರು ನಮಗೆ ತಿಳಿದಂತೆ ಒಬ್ಬಉತ್ತಮ ವಾಗ್ಮಿ. ಅವರು ಯಾವುದೇ ವಿಚಾರವನ್ನು ಹೇಳಬೇಕಾದರೆ ಅದನ್ನು ವಿಶ್ಲೇಷಿಸಿ, ಸರಳವಾಗಿ ಶುಧ್ಧ ಕನ್ನಡದಲ್ಲಿ ಎಲ್ಲರಿಗೂ ನಿಲುಕುವಂತೆ ಉಚಿತವಾದ ಉದಾಹರಣೆಗಳೊಂದಿಗೆ ವಿವರಿಸುವ ಶಕ್ತಿ ಹಾಗೂ ಪ್ರತಿಭೆಯನ್ನು ಪಡೆದುಕೊಂಡಿದ್ದಾರೆ. ಕೆಲವು ಪ್ರಶ್ನೆಗಳಿಗೆ ನೇರವಾಗಿ ಉತ್ತರ ಕೊಡದೆ, ತಮ್ಮ ಅಭಿಪ್ರಾಯವನ್ನು ಇತರರ ಮೇಲೆ ಹೇರದೆ ಪ್ರಶ್ನೆಯ ಸಂದರ್ಭವನ್ನು (Context) ಎತ್ತಿಕೊಂಡು ಅದಕ್ಕೆ ಹಿನ್ನೆಲೆ ನೀಡಿ ಪ್ರಶ್ನೆ ಕೇಳಿದವರೇ ಉತ್ತರವನ್ನು ಕಂಡುಕೊಳ್ಳುವ ಒಂದು ಅವಕಾಶವನ್ನು ಕಲ್ಪಿಸುತ್ತಾರೆ. ಇದು ಅವರ ಸಂವಾದದ ವಿಶೇಷ ಶೈಲಿ.

ಈ ಸಂವಾದದಲ್ಲಿನ ಕೆಲವು ಗಮನಾರ್ಹ ಮಾತುಗಳನ್ನು ಇಲ್ಲಿ ಪ್ರಸ್ತಾಪ ಮಾಡಲಾಗಿದೆ, ಅವು ಹೀಗಿವೆ;

ಪರಿಸರದಲ್ಲಿ ಯಾವ  ಭಾಷೆ ಇರುತ್ತೋ ಅದೇ ನಮ್ಮ ಭಾಷೆಯೂ ಆಗುತ್ತೆ.

 ಬಳಸಿದಷ್ಟೂ ವೃದ್ಧಿಯಾಗೋದು ಭಾಷೆ ಮತ್ತು ದೀಪ’.

ಮನೆಯ ಹಲವು ಕಿಟಕಿ ಬಾಗಿಲುಗಳನ್ನು ತೆಗೆದಾಗ ಹೇಗೆ ಹೆಚ್ಚು ಬೆಳಕು ಬರುತ್ತೊ ಹಾಗೆ ಬೇರೆ ಬೇರೆ ಭಾಷೆಗಳನ್ನು ಕಲಿಯೋದು.

ಈ ಮೇಲಿನ ಮಾತುಗಳನ್ನು ಗಮನಿಸಿದಾಗ ಈ ವಿಚಾರಗಳು ಹೊಸತೇನು ಅಲ್ಲ ಆದರೆ ಅದನ್ನು ಹೇಳುವ ರೀತಿ ಬಹಳ ಸೊಗಸಾಗಿದೆ, ಎಷ್ಟು ನಿಜ! Very convincing! – ಸಂ )

***

ಎಚ್. ಎಸ್. ವೆಂಕಟೇಶಮೂರ್ತಿಯವರೊಡನೆ ಒಂದು ಆತ್ಮೀಯ ಸಂವಾದ- ಡಾ. ಪ್ರೇಮಲತ ಬಿ.

ಕನ್ನಡ ಬಳಗದ   ದೀಪಾವಳಿ ಕಾರ್ಯಕ್ರಮಗಳು 18-19/10/2014 ರಂದು ಚೆಸ್ಟರ್ ಫೀಲ್ದ ನ ವೈಂಡಿಂಗ್ ವ್ಹೀಲ್ ಸಭಾಂಗಣದಲ್ಲಿ ನಡೆಯಿತು. ವಿಶೇಷ ಅತಿಥಿಗಳಾಗಿ ಬಂದಿದ್ದ ಪ್ರಸಿಧ್ಧ ಮತ್ತು ವಿಶಿಷ್ಟ ಸಾಹಿತಿಗಳಾದ ಹೆಚ್.ಎಸ್.ವಿ.ಯವರೊಡನೆ ಒಂದು ಕಿರು ಸಂದರ್ಶನ ನಡೆಯಿತು.

ನಮ್ಮ ಈ ಅನಿವಾಸಿಯ ಪ್ರಥಮ ಸಭೆಯ ಅಧ್ಯಕ್ಷತೆಯನ್ನು ವಹಿಸಿ ನಮ್ಮೆಲ್ಲರಲ್ಲಿ  ಹೆಮ್ಮೆ ತಂದ ಕವಿ ಇವರು. ಇತ್ತೀಚೆಗೆ ಇವರ ರಾಮಾಯಣಕ್ಕೆ ಸಂಬಂಧಿಸಿದ ಮಹಾಕೃತಿ ಕೂಡ ಬಿಡುಗಡೆಯಾಗಿದೆ. ’ತೆರೆದಷ್ಟೂ ಬಾಗಿಲು…..’ ಎನ್ನುವ  ಅಂಕಣವನ್ನು  ಅವಧಿ ದಿನಪತ್ರಿಕೆಯಲ್ಲಿ ಇವರು ಬರೆಯುತ್ತಿದ್ದು, ಯಾವುದು ಕಾವ್ಯ, ಅದರ ಬೆಳವಣಿಗೆ ಇತ್ಯಾದಿ ಕುರಿತು ಘನತರವಾದ ಪ್ರಬುದ್ಧ ಬರವಣಿಗೆಯ ಸರಣಿ ಬರಹದಲ್ಲಿ ತೊಡಗಿದ್ದಾರೆ. ಸರಳತೆ, ಪ್ರಬುದ್ಧತೆ ಮತ್ತು ನೈಜತೆಯನ್ನು ತುಂಬಿದ ಕವಿ ಮತ್ತು ಹೃದಯವಂತ ಕನ್ನಡಿಗರಿವರು. ’ಅನಿವಾಸಿ’ಗೆಂದೇ ಈ ಸಂದರ್ಶನವನ್ನು ಮಾಡಿದ್ದು.

ಈ ಸಂದರ್ಶನದ ಒಂದು ತುಣುಕನ್ನು ಯು ಟ್ಯೂಬಿ ನಲ್ಲಿ ನೋಡಬಹುದು. https://www.youtube.com/watch?v=zTJtHv599-Q

ಈ ಸಂದರ್ಶನವನ್ನು ರೆಕಾರ್ಡ್ ಮಾಡಿ, ಪರಿಷ್ಕೃತಗೊಳಿಸಿ, ಯು ಟ್ಯೂಬಿಗೇರಿಸಿದವರು ಡಾ. ಶ್ರೀವತ್ಸ ದೇಸಾಯಿಯವರು.

ಪ್ರೇಮಲತ –  ನಮಸ್ಕಾರ ಎಚ್, ಎಸ್.ವಿ ಯವರಿಗೆ. ನೀವು ಕಥೆ-ಪ್ರಬಂಧಗಳಿಂದ ಶುರುಮಾಡಿ ಸಾಹಿತ್ಯದ ನಾನಾ ಪ್ರಕಾರಗಳಲ್ಲಿ ಬರೆದಿದ್ದೀರಿ. ಆದ್ರೆ ನೀವು ಕಥನ-ಕವನಗಳನ್ನ ಪ್ರಧಾನ ಮಾಧ್ಯಮ ಮಾಡಿಕೊಳ್ಳೋದಕ್ಕೆ ಏನಾದ್ರೂ ಕಾರಣಗಳಿವೆಯೇ? ಉದಾಹರಣೆಗೆ, ಸಾಹಿತ್ಯ ಪ್ರಕಾರಗಳಲ್ಲಿ ಆ ಮಾಧ್ಯಮಕ್ಕಿದ್ದ ಕೊರತೆ?

ಹೆಚ್.ಎಸ್.ವಿ.- ೧೯೫೦ ರಲ್ಲಿ ಅಡಿಗರಿಂದ ನವ್ಯಸಾಹಿತ್ಯದ ಉದಯವಾದ ಮೇಲೆ ಹಳೆ ಸಾಹಿತ್ಯ ಪ್ರಕಾರಗಳು ಹಿಂದೆ ಬಿದ್ದವು. ಸಾನೆಟ್ ಗಳ ರಚನೆ, ಭಾವಗೀತೆಗಳ ರಚನೆ, ಕಥನ-ಕವನಗಳು ಇವನ್ನು ಬರೆಯುವವರು ವಿರಳವಾದ್ರು. ೧೯೭೦ ರ ವೇಳೆಗೆ ಈ ಕಳೀತಾ ಇದ್ದ ಪ್ರಕಾರಗಳ ಪುನರುತ್ಥಾನದ ಸಂಕಲ್ಪ ತೊಟ್ಟೆ.

ಮಾಸ್ತಿ, ಎಕ್ಕುಂಡಿ, ಗೋವಿಂದ ಪೈ, ಕಡೆಂಗೋಡ್ಲು ಶಂಕರಭಟ್ಟರು ಕಥನ-ಕವನಗಳನ್ನು ಬರೆದಿದ್ದರು. ರಾಜರತ್ನಂ ಇನ್ನಿತರರ ನಂತರ ಮಕ್ಕಳ ಸಾಹಿತ್ಯಕ್ಕೂ ಕೊರತೆ ಇತ್ತು. ೧೯೭೭ ರಲ್ಲಿ  ನನ್ನ ಸಿಂದಾಬಾದನ ಆತ್ಮಕತೆ-೩ ನೀಳ್ಗತೆಗಳನ್ನು ಒಳಗೊಂಡ ಕಥನ-ಕವನ ಹೊರಬಂತು.

ಪ್ರೇಮಲತ– ಹೋದಿಗೆರೆ, ಹೊಳಲ್ಕೆರೆ, ಚಿತ್ರದುರ್ಗದ ಹಿನ್ನೆಲೆ ಇರೋ ನಿಮ್ಮ ಕೆಲವು  ಬರಹದಲ್ಲಿ ಜಾನಪದ ಮತ್ತು ಯಕ್ಷಗಾನದ ಪ್ರಭಾವ ಇದೆ. ಆದ್ರೆ ಬೆಂಗಳೂರಿನ ಆಡುನುಡಿಯನ್ನು ಕೂಡ ನೀವು ಇನ್ನಿಲ್ಲ ಅನ್ನುವಂತೆ ಉಪಯೊಗಿಸಿದ್ದೀರಿ. ಇದು ಅಳವಡಿಕೆ ತಂತ್ರನೇ ಅಥವಾ ಪರಿಸರದ ಪ್ರಭಾವವೇ?

ಹೆಚ್.ಎಸ್.ವಿ.- ವಸ್ತು ಯಾವ ಭಾಷೆಯನ್ನು ಅಪೇಕ್ಷಿಸುತ್ತೆ ಅನ್ನೋದರ ಮೇಲೆ ನನ್ನ ಬರವಣಿಗೆ ಅವಲಂಬಿಸುತ್ತೆ. ಅನೇಕ ಭಾಷಾವಲಯಗಳು ನಮ್ಮ ಮನಸ್ಸಲ್ಲಿ ಜಾಗೃತವಾಗಿರುತ್ತವೆ. ’ಏಕಂ ಸತ್” ಅನ್ನೋದ್ರಲ್ಲಿ ನನಗೆ ನಂಬಿಕೆಯಿಲ್ಲ, ’ಆನೇಕಂ ಸತ್” ಅನ್ನೋದೆ ನಿಜ. ಕನ್ನಡದಲ್ಲಿ ಅನೇಕ ತರದ ಕನ್ನಡಗಳಿವೆ. ಧಾರವಾಡ ಕನ್ನಡ, ದಾವಣಗೆರೆ ಕನ್ನಡ, ಮೈಸೂರು ಕನ್ನಡ ಹೀಗೇ ಹಲವು ತರದ ಕನ್ನಡದಲ್ಲಿ ಬರೀಬಹುದು. ನವೋದಯಕ್ಕಿಂತ ಮೊದಲು, ಕುವೆಂಪು ಅವರು ’ಕನ್ನಡವೊಂದೇ ಸತ್ಯ’ ಅಂತ ಹೇಳಿದ್ದಾರೆ. ಒಂದು ಕನ್ನಡ ಮಾಡ್ಬೇಕು ಅಂತ ಬೇಂದ್ರೆ ಕೂಡ ಕರೆ ಕೊಟ್ಟರು. ಆದ್ರೆ ಬೇಂದ್ರೆಯವರ ಧಾರವಾಡ ಕನ್ನಡ ಮಿಶ್ರಿತ ಕವನಗಳು ಜನಪ್ರಿಯವಾದಂತೆ ಸಂಸ್ಕೃತ  ಕವನಗಳು ಜನಪ್ರಿಯವಾಗಲಿಲ್ಲ.

hsv-interview
ಛಾಯಾ ಚಿತ್ರ-ಡಾ.ಶ್ರೀವತ್ಸ ದೇಸಾಯಿ

 

ಪ್ರೇಮಲತ– ಪ್ರಾಥಮಿಕ ಶಿಕ್ಷಣವನ್ನು  ಕನ್ನಡದಲ್ಲಿ ಪಡೆದಿರೋ ಜನ, ಪ್ರಪಂಚದ ಯಾವುದೇ ಮೂಲೆನಲ್ಲಿದ್ರೂ, ಸಾಹಿತ್ಯವನ್ನು ಭಾಷೆಯನ್ನು ಉಳಿಸೋಕೆ ಪ್ರಯತ್ನ ಮಾಡೋದು ನಿಮ್ಮ ಗಮನಕ್ಕೆ ಬಂದಿರಬಹುದು. ನೀವು ಬಹಳಷ್ಟು ಮಕ್ಕಳ ಸಾಹಿತ್ಯ ಬರೆದಿದ್ಡೀರಿ. ಭಾಷೆ ಮತ್ತು ಸಾಹಿತ್ಯನ ಉಳಿಸೋಕೆ ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಕಡ್ಡಾಯವಾಗಬೇಕು ಅನ್ನೋ ಜನದ ನಿಲುವು ನಿಮಗೆ ಸರಿ ಅನ್ನಿಸುತ್ತಾ?

ಹೆಚ್.ಎಸ್.ವಿ. -ಆರಂಭದಲ್ಲಿ ನಾವು ಯಾವುದನ್ನು ಅನುಕರಣೆಯಿಂದ ಕಲೀತೀವೋ ಅದೇ ನಮ್ಮ ಭಾಷೆಯಾಗುತ್ತೆ. ಅಂತರಂಗದ ದ್ರವ್ಯವಾಗುತ್ತೆ. ದಂಡಿ ಹೇಳ್ತಾನೆ, ಭಾಷೆಯಿಲ್ಲದಿದ್ರೆ ಇಡೀ ಜಗತ್ತು ಅಂಧಕಾರದಲ್ಲಿ ಮುಳುಗುತ್ತೆ ಅಂತ.

ಭಾಷೆ ಸಹಜವಲ್ಲ. ಅಂದ್ರೆ ಹುಟ್ಟಿನಿಂದ ಬಂದದ್ದಲ್ಲ. ಅಳು-ನಗುವಿನಂತಲ್ಲ. ಅನುಕರಣೆಯಿಂದ ಬರುವಂತದ್ದು. ಇದು ಶಿಕ್ಷಣದಿಂದ ಮಾತ್ರ ಬರುವಂತದ್ದಲ್ಲ. ಪರಿಸರದಲ್ಲಿ ಯಾವ  ಭಾಷೆ ಇರುತ್ತೋ ಅದೇ ನಮ್ಮ ಭಾಷೆಯೂ ಆಗುತ್ತೆ. ಆ ಭಾಷೆಯಲ್ಲೆ ನಾವು ಚಿಂತಿಸೋದು, ಕನಸು ಕಾಣುವುದು.

ಪ್ರೇಮಲತ– ಕಾಲ ಬದಲಾಗಿದೆ. ಸಾಮೂಹಿಕ  ಮಾಧ್ಯಮಗಳಲ್ಲಿ  ಮತ್ತು ಜನಪ್ರಿಯ ಎಲೆಕ್ಟ್ರಾನಿಕ್  ಉಪಕರಣಗಳಲ್ಲಿ ಕನ್ನಡದ ಬಳಕೆ ಸಲೀಸಾದರೆ, ಹೆಚ್ಚಾದರೆ ಕನ್ನಡ ಇನ್ನಷ್ಟು ಕಾಲ ಉಳಿಯುತ್ತೆ ಅನಿಸುತ್ತಾ?

ಹೆಚ್.ಎಸ್.ವಿ.- ಬಳಸಿದಷ್ಟೂ ವೃದ್ಧಿಯಾಗೋದು ಭಾಷೆ ಮತ್ತು ದೀಪ. ಅದಕ್ಕೆಂದೇ ’ಹಚ್ಚೇವು ಕನ್ನಡದ ದೀಪ’ ಅಂತ ಹೇಳೋದು. ಹೆಚ್ಚು ಹೆಚ್ಚು ರೀತಿಯಲ್ಲಿ ಬಳಸಿದಷ್ಟೂ ಕನ್ನಡದ ವೃದ್ಧಿ ಯಾಗುತ್ತೆ.

ಮಕ್ಕಳಿಗೆ ಒಟ್ಟಿಗೇ ಹಲವು ಭಾಷೆಗಳನ್ನು ಕಲಿವ ಶಕ್ತಿಯಿದೆ. ಕಲಿವಾಗ ತಪ್ಪು ಮಾಡುವ ಚಿಂತೆ ಮಕ್ಕಳಿಗಿಲ್ಲ. ಹಿರಿಯರಲ್ಲಿ ಅವಮಾನದ ಅಂಜಿಕೆ ಇರೋದರಿಂದ  ಭಾಷೆ ಕುಂಠಿತವಾಗುತ್ತೆ. ಇಲ್ಲಿನ ಮಕ್ಕಳ ಪರಿಸರದಲ್ಲಿ ಅವರು ಇಂಗ್ಲೀಷ್ ಕಲೀಲಿ ಅದರ ಜೊತೆ ಕನ್ನಡವನ್ನು ಕೂಡ ಹೇಳಿಕೊಡಿ. ಮಕ್ಕಳಿಗೆ ಭಾಷೆ ಭಾರ ಆಗೋದಿಲ್ಲ. ಮನೆಯ ಹಲವು ಕಿಟಕಿ ಬಾಗಿಲುಗಳನ್ನು ತೆಗೆದಾಗ ಹೇಗೆ ಹೆಚ್ಚು ಬೆಳಕು ಬರುತ್ತೊ ಹಾಗೆ ಬೇರೆ ಬೇರೆ ಭಾಷೆಗಳನ್ನು ಕಲಿಯೋದು.

ಮಾತೃ ಭಾಷೆ ಅಂದ್ರೆ ಅಮ್ಮ ಮಾತಾಡೋ ಭಾಷೆ ಅಲ್ಲ. ಎಷ್ಟೋ ಬಾರಿ ಇದು ಪರಿಸರದ ಭಾಷೆಯಾಗಿಬಿಡತ್ತೆ

ಮಾಸ್ತಿಯವರ ಮನೆ ಮಾತು ತಮಿಳು ಆದ್ರೆ ಬೀದಿ ಮಾತು ಕನ್ನಡ. ಬೇಂದ್ರೆ ಯವರ ಮನೆ ಮಾತು ಮರಾಠಿ. ಪುತಿನ ಅವರ ಮನೆ ಮಾತು ತಮಿಳು. ನಾ. ಕಸ್ತೂರಿಯವರು ಮಲೆಯಾಳಂ ನಲ್ಲಿ ಬರೀಲಿಲ್ಲ. ಸಿದ್ಧಯ್ಯ ಪುರಾಣಿಕರು ಹೈದ್ರಾಬಾದ್ ಕರ್ನಾಟಕದಲ್ಲಿದ್ರು ಬರೆದದ್ದು ಕನ್ನಡದಲ್ಲಿ. ಪ್ರಜ್ಞೆ ಮತ್ತು ಪರಿಸರ ಎರಡು ಅವಿಚ್ಛಿನ್ನ ಭಾಗಗಳು. ಅನಂತಮೂರ್ತಿಯವರು ಇದನ್ನೆ ಹೇಳ್ತಾರೆ. ನಿಮ್ಮ ಈ ವಾತಾವರಣದಲ್ಲಿ ನೀವು ಹಾಲುಡಿಸಿದಂತೆ ಕನ್ನಡ ಕಲಿಸೋದು. ನೀವು ಕೊಟ್ಟಷ್ಟು ಅವರಿಗೆ ದಕ್ಕುತ್ತೆ.

ಪ್ರೇಮಲತ– ಕನ್ನಡ ಸಾಹಿತ್ಯಕ್ಕೆ ನಿಮ್ಮ ಕೊಡುಗೆ ಅದ್ಭುತವಾದ್ದು. ನಿಮ್ಮ ಮುಂದಿನ ರಚನೆ-ಬರವಣಿಗೆ ಏನು ಅಂತ ಕೇಳಬಹುದಾ?

ಹೆಚ್.ಎಸ್.ವಿ.- ತಿಳಿಗನ್ನಡದಲ್ಲಿ ಪಂಪನ ’ಆದಿಪುರಾಣ” ಬರೀಬೇಕು ಅಂತಿದೆ. ’ಬುದ್ಧಸ್ಮಿತ’ ಅನ್ನೋ ಬುದ್ಧನ ಬಗೆಗಿನ ಮಹಾಕಾವ್ಯವೊಂದನ್ನು ರಚಿಸೋ ಕನಸಿದೆ.ಆದ್ರೆ ಏನು ಬರೀತೀನೆ ಅನ್ನೋದು ನಿಜಕ್ಕು ಅಸ್ಪಷ್ಟ ಮತ್ತು ನಿಗೂಢ!

ಪ್ರೇಮಲತ– ಹೊರದೇಶದ ಕನ್ನಡಿಗರಾದ ನಾವು, ಕನ್ನಡ ಉಳಿಸೋಕೆ ಮಾಡೋ ಪ್ರಯತ್ನಗಳ ಬಗ್ಗೆ ನಿಮ್ಮ ಸಲಹೆ ಏನು?

ಹೆಚ್.ಎಸ್.ವಿ.- ನಿಮಗಿರೋ ಕನ್ನಡದ ಅಭಿಮಾನ ಬೆಂಗಳೂರಿನವರಿಗಿಲ್ಲ. ನನ್ನ ಸಲಹೆ ಇಷ್ಟೆ, ಕನ್ನಡದಲ್ಲಿ ಮಾತಾಡಿ, ಕನ್ನಡದಲ್ಲಿ ಕೆಲಸಮಾಡಿ. ಇಲ್ಲಿ ಎಲ್ಲ ಚಟುವಟಿಕೆಗಳನ್ನು ಕನ್ನಡದಲ್ಲಿ ಮಾಡ್ತಿರೋದನ್ನು ನೋಡಿ ನನಗೆ ತುಂಬ ಆಶ್ಚರ್ಯ. ಕನ್ನಡದಲ್ಲಿ ಮಾತಾಡಿ ಕನ್ನಡದಲ್ಲಿ ಕೆಲಸಮಾಡ್ತಾ ಹೋಗಿ, ಕನ್ನಡ ಖಂಡಿತಾ ಉಳಿಯುತ್ತದೆ.

*              *               *                *            *

ಸಂದರ್ಶನದ ಒಂದು ತುಣುಕನ್ನು ಯು ಟ್ಯೂಬಿ ನಲ್ಲಿ ನೋಡಿ: