ಸಂಕಟ (ಕಥೆ) – ಲಕ್ಷ್ಮೀನಾರಾಯಣ ಗುಡೂರ

ಅನಿವಾಸಿಯ ಬಂಧುಗಳಿಗೆ ನಮಸ್ಕಾರ. ಇಂದು ನನ್ನ ಹತ್ತಿರ ಬೇರೆ ಏನೂ ಸರಕು ಇರಲಿಲ್ಲವಾದ್ದರಿಂದ, ಈ ಹಿಂದೆ ನಾನೇ ಬರೆದ ಕಥೆಯೊಂದನ್ನು ಹಾಕುತ್ತಿರುವೆ. ನಾನು ಕಥೆಗಾರನಲ್ಲವೆಂದು ಗೊತ್ತಿದ್ದೂ ನನ್ನ ಒಂದು ಪ್ರಯತ್ನವನ್ನು ನಿಮ್ಮಂತಹ ಪ್ರಬುದ್ಧರ ಮುಂದೆ ಇಡುತ್ತಿರುವೆ. ದಯವಿಟ್ಟು ನಿಮ್ಮ ಅಭಿಪ್ರಾಯ, constructive criticism ತಿಳಿಸಿ, ಓದಿದ ನಂತರ. – ಲಕ್ಷ್ಮೀನಾರಾಯಣ ಗುಡೂರ (ವಾರದ ಸಂಪಾದಕ)

28.06.2020

ಹೆಚ್ಚು ಕಡಿಮೆ ಆರು ತಿಂಗಳಾದ ಮೇಲೆ ಮತ್ತೆ ಇಲ್ಲಿ ಬರೆಯುತ್ತಿರುವೆ. ಬರೆಯುವ ವಿಷಯ ಬಹಳವಿದೆ – ಎಲ್ಲಿಂದ ಪ್ರಾರಂಭಿಸುವುದೋ ಗೊತ್ತಿಲ್ಲ. ಅದರ ಬಗ್ಗೆ ಚಿಂತಿಸುತ್ತ ಹತ್ತು ದಿನಗಳು ಹೋದವು. ಇವತ್ತೂ ಕೈಯಲ್ಲಿ ಐ-ಪ್ಯಾಡಿದೆ … ಆದರೆ ಬೆರಳುಗಳು ಓಡುತ್ತಿಲ್ಲ. ನನ್ನ ಯೂನಿವರ್ಸಿಟಿ ಅಪ್ಲಿಕೇಶನ್ನಿನಿಂದ ಶುರುವಾದದ್ದು, ಇಂಟರ್ವ್ಯೂ, ಏ-ಲೆವೆಲ್ ಮಾಕ್ ಪರೀಕ್ಷೆ, ಮುಂದಿನ ತಯಾರಿಗಳ ಮೂಲಕ ಹಾಯ್ದು ನಿನ್ನೆ ಫೈನಲ್ ಪರೀಕ್ಷೆಗಳು ಮುಗಿಯುವವರೆಗೆ ಸತತವಾಗಿ ಒಂದಾದ ಮೇಲೊಂದರಂತೆ ಬಂದು, ನನ್ನ ಸ್ಥಿತಿ ಆ ಬಿಬಿಸಿಯ ಅಟ್ಟೆನ್ಬರಾ ಅವರ ಬ್ಲೂ ಪ್ಲಾನೆಟ್ಟಿನ ತಿಮಿಂಗಿಲದ ಹಾಗಿತ್ತು – ಮಧ್ಯ ಮಧ್ಯ ಮೇಲೆ ಬಂದು ಉಸಿರೆಳೆದುಕೊಳ್ಳುವುದು ಮತ್ತೆ ಓದು / ಕೆಲಸದ ಜೀವನದಲ್ಲಿ ಮುಳುಗು ಹಾಕುವುದು. ಇವತ್ತು ಖಾಲಿ ಇದ್ದೇನೆ, ಬ್ಲಾಗಿನಲ್ಲೇನಾದರೂ ಬರೆಯೋಣ ಅನ್ನಿಸಿ ಎತ್ತಿಕೊಂಡೆ.

ಅಮ್ಮ ಕರೆಯುತ್ತಿದ್ದಾಳೆ ಕೆಳಗಿನಿಂದ. ನೋಡಿ ಬಂದು ಮತ್ತೆ ಬರೆಯುತ್ತೇನೆ.

ವೃತ್ತಿಯಲ್ಲಿ ವೈದ್ಯಳಾಗಿದ್ದ ಅಮ್ಮನಿಗೆ ಕೋವಿಡ್ ಆಗಿದ್ದು, ನಾಲ್ಕು ತಿಂಗಳ ಹಿಂದೆ ಫೆಬ್ರುವರಿಯಲ್ಲಿ. ನನ್ನ ಮಾಕ್ ಎಕ್ಸಾಮ್ ಮುಗಿದಂದು. ಪರೀಕ್ಷೆಯ ಕೊನೆಯ ದಿನ ಅವತ್ತು. ಬೆಳಗ್ಗೆ ನಾನು ಹೊರಡುವಾಗಲೇ ಅಮ್ಮ ತಲೆ ಹಿಡಿದುಕೊಂಡು ಕೂತಿದ್ದಳು. “ಯಾಕೋ ಸ್ವಲ್ಪ ತಲೆನೋವು ಕಣೆ, ಕೆಮ್ಮು, ಜ್ವರ ಯಾವ್ದೂ ಇಲ್ಲ ಪುಣ್ಯಕ್ಕೆ; ಇಲ್ಲಂದರೆ ಕೋವಿಡ್ಡೋ ಏನೋ ಅನ್ನೋ ಚಿಂತೆ ಮಾಡಬೇಕಾಗಿರ್ತಿತ್ತು. ಎಲ್ಲ ಕಡೆ ಅದೊಂದು ಶುರುವಾಗಿದೆಯಲ್ಲ, ನಮ್ಮ ಆಸ್ಪತ್ರೆಯಲ್ಲಿ ಸಾಕಷ್ಟು ಪೇಶಂಟ್ಗಳು ಬರುತ್ತಿದ್ದಾರೆ! ನಿನ್ ಪರೀಕ್ಷೆ ಬೇರೆ. ಕೊನೇ ದಿನ, ಮುಗಿಸಿ ಬಿಡು. ನೋಡೋಣ” ಅನ್ನುತ್ತ ಪ್ಯಾರಾಸೆಟಮಾಲ್ ನುಂಗಿ ನನಗೆ ಬೈ ಹೇಳಿದಳು. ಪಪ್ಪ ಆಗಲೇ ಕಾರು ಸ್ಟಾರ್ಟ್ ಮಾಡಿಯಾಗಿತ್ತು. ನಾನು ಬಾಗಿಲು ದಾಟುವಾಗಲೇ “ದೇವರಿಗೆ ಕೈ ಮುಗಿದು ಹೋಗು, ಗುಡ್ ಲಕ್” ಅಂತ ಅಮ್ಮನ ಕೂಗು ಕೇಳಿಸಿ, ಬಾಗಿಲ ಮೇಲಿದ್ದ ಗಣಪತಿಯ ಕಡೆ ನೋಡಿ ಒಮ್ಮೆ ಎದೆಗೆ, ಕಣ್ಣಿಗೆ ಕೈ ಮುಟ್ಟಿಸಿಕೊಂಡು “ಅಮ್ಮಾ, ಬಾಗಿಲು ಹಾಕ್ಕೋ; ಪಪ್ಪ ಆಗಲೇ ಕಾರಲ್ಲಿದಾನೆ” ಅಂದು ಬಾಗಿಲು ಮುಚ್ಚಿ ಹೊರಟೆ.

ಸಂಜೆ ಶಾಲೆಯಿಂದಲೇ ಗೆಳತಿಯರೊಂದಿಗೆ ಹೊರಗೆ ಊಟಕ್ಕೆ ಹೋಗುವ ಬಗ್ಗೆ ಅಮ್ಮನಿಗೆ ಗೊತ್ತಿದ್ದುದರಿಂದ, ಒಂದು ಮೆಸೇಜು ಕಳಿಸಿ ನಾವು ನಾಲ್ವರೂ ಇಟಾಲಿಯನ್ ರೆಸ್ಟಾರೆಂಟಿಗೆ ಹೋದೆವು. ಒಂಬತ್ತೂವರೆಗೆ ಪಪ್ಪನ ಮೆಸೇಜು ಬಂತು – “Waiting in the car outside”. ಗೆಳತಿಯರಿಗೆ ವಿದಾಯ ಹೇಳಿ ಬಂದು ಕಾರಲ್ಲಿ ಕೂತಾಗ ಒಂಬತ್ತು-ಮುಕ್ಕಾಲು. ಪಪ್ಪ ಯಾಕೋ ಚಿಂತೆಯಲ್ಲಿರುವಂತೆ ಅನ್ನಿಸಿತು. ಒಂದೆರಡು ಸಲ ಕೇಳಿದರೂ ಅದಕ್ಕುತ್ತರ ಬರಲಿಲ್ಲ; ನನ್ನ ಕಳೆದ ದಿನದ ಬಗ್ಗೆ ಮಾತಾಡುತ್ತ ಡ್ರೈವ್ ಮಾಡಿದ ಪಪ್ಪ.

ಮನೆಗೆ ಬಂದಾಗ ಅಮ್ಮ ಇರಲಿಲ್ಲ. ಆಗಲೇ ನನಗೆ ನೆನಪಾಗಿದ್ದು ಅಮ್ಮನ ಬೆಳಗಿನ ತಲೆನೋವು. “ಅಮ್ಮ ಎಲ್ಲಿ?” ಊಟದ ಟೇಬಲ್ಲಿನ ಮುಂದೆ ಕುಳಿತ ಪಪ್ಪನ ಮುಖ ನೋಡುತ್ತ ಕೇಳಿದೆ.

“ಮಧ್ಯಾಹ್ನ ಜ್ವರ ಹೆಚ್ಚಾಗಿ, ಉಸಿರಾಟಕ್ಕೆ ತೊಂದರೆ ಅನ್ನಿಸಿದಾಗ ಅವಳನ್ನು ಆಸ್ಪತ್ರೆಗೆ ಕರಕೊಂಡು ಹೋಗಬೇಕಾಯ್ತು. ಆಕ್ಸಿಜೆನ್ ಸ್ಯಾಚುರೇಶನ್ ಕಡಿಮೆಯಾಗಿತ್ತು. ಎಕ್ಸ್-ರೇ, ಸಿಟಿ ಸ್ಕ್ಯಾನ್ ಮತ್ತು ಕೋವಿಡ್ ಟೆಸ್ತ್ ಮಾಡಿದ್ರು, ಮೊದಲಿನ ಎರಡರಲ್ಲೂ ಪಾಸಿಟಿವ್ ಅಂತ ಬಂದುದರಿಂದ ಅಲ್ಲೇ ಅಡ್ಮಿಟ್ ಮಾಡಿಕೊಂಡಿದ್ದಾರೆ. ಕೋವಿಡ್ ರಿಸಲ್ಟ್ ಬರಲಿಕ್ಕೆ ಎರಡು ದಿನ ಬೇಕಾಗಬಹುದಂತೆ. ನಿನ್ನ ಪರೀಕ್ಷೆ ಮುಗಿದು, ಊಟ ಮುಗಿಸಿಕೊಂಡು ಬರ್ತೀಯಲ್ಲ ಅಂತ ಮುಂಚೆ ಹೇಳ್ಳಿಲ್ಲ” ಅಂದ ಪಪ್ಪ.

ನನ್ನ ಎದೆ ಡವಡವ ಹೊಡೆದುಕೊಂಡರೂ, ತೋರಿಸಿಕೊಳ್ಳದೆ “ಹೇಗಿದ್ದಾಳೆ ಈಗ” ಅಂದೆ. “ಸ್ವಲ್ಪ ಹೊತ್ತಿನ ಮುನ್ನ ಫೋನು ಮಾಡಿದ್ಲು, ಆಮೇಲೆ ಮಾಡ್ತಾಳಂತೆ ಎದ್ದಿದ್ದರೆ” ಅನ್ನುವುದರಲ್ಲಿ ನನ್ನ ಫೋನು ಸದ್ದು ಮಾಡಿತು. ಸುಸ್ತಿನ ಧ್ವನಿಯಲ್ಲಿ ಮಾತಾಡಿದ ಅಮ್ಮ, ಎರಡು ನಿಮಿಷದಲ್ಲಿ ಒಂದಿಪ್ಪತ್ತು ಬಾರಿ ಕೆಮ್ಮಿದಳು.

“ಸರಿ, ಮಲಕ್ಕೊ. ಗುಡ್ ನೈಟ್” ಫೋನು ಕಟ್ ಮಾಡಿದೆ. ನಾನೂ ಮಲಗಲು ಹೋದೆ.

ಬೆಳಗ್ಗೆ ಎದ್ದಾಗ ಹನ್ನೆರಡು-ಇಪ್ಪತ್ತು. ಹೇಗೂ ವೀಕೆಂಡು ಅಲ್ಲಿಂದ ಹಾಫ್ ಟರ್ಮ್ ರಜೆ. “ಅಮ್ಮು, ನಾನು ರಾತ್ರಿಯಿಡೀ ಮಲಗಲಿಕ್ಕೇ ಆಗಿಲ್ಲ, ಒಂದೆರಡು ಗಂಟೆ ಮಲಗಿರ್ತೀನಿ” ಅಂತ ಬಾಗಿಲಲ್ಲೇ ಹೇಳಿ ಮಲಗಲು ಹೋದ ಪಪ್ಪ. ಇಡೀ ದಿನ ಮನೆಯೆಲ್ಲ ಭಣಭಣ, ಅತಿಯಾದ ನಿಶ್ಶಬ್ದ. ಅಮ್ಮನ ಮಾತಿಲ್ಲ, ಕೆಲಸಗಳಿಗೆ ಸಹಾಯ ಮಾಡುತ್ತ ಅವಳ ಹಿಂದೆಯೇ ಸುತ್ತುವ ಅಪ್ಪನ ಜೋಕುಗಳಿಲ್ಲ. ಅವತ್ತು ಶನಿವಾರ ಮಧ್ಯಾಹ್ನದ ರೂಟೀನ್ ಅಜ್ಜಿ-ತಾತನ ಜೊತೆಯ ಚಾಟಿಂಗಿಗೂ ನಾನೊಬ್ಬಳೇ ಇದ್ದೆ. ಅಜ್ಜಿ-ತಾತನಿಗೆ ಈಗಲೇ ಹೇಳಿ ಗಾಬರಿಮಾಡಬಾರದು ಎಂದು ಹಿಂದಿನ ರಾತ್ರಿಯೇ ಹೇಳಿದ್ದ ಪಪ್ಪ.

ಇನ್ನೆರಡು ದಿನ ಹೀಗೆಯೇ ಕಳೆಯಿತು. ಕೋವಿಡ್ ಸ್ವಾಬ್ ಪಾಸಿಟಿವ್ ಅಂತ ಬಂದಿತ್ತು. ಫೋನಿನ ಮೇಲೆಯೇ ಅಮ್ಮನೊಡನೆ ಮಾತು. ಇನ್ನೂ ಸುಸ್ತು, ಕೆಮ್ಮು ಹೆಚ್ಚಾದಂತೆಯೇ ಅನ್ನಿಸುತ್ತಿತ್ತು. ಮನೆಯಲ್ಲಿ ಸ್ಮಶಾನಮೌನ. ಫೋನಿನಲ್ಲಿ ಕೇಳಿಸುತ್ತಿದ್ದ ಅಮ್ಮನ ಕೆಮ್ಮು ಮಾತ್ರ ಮನೆಯಲ್ಲಿ ಕೇಳಿಸುವ ಸದ್ದಾಗಿತ್ತು.

ಏನಿದು ಕೋವಿಡ್, ಏನು ಅದಕ್ಕೆ ಉಪಾಯ ಅಂತ ಗೂಗಲ್ ಮಾಡಿ ನೋಡಿದರೆ, ಜಾಸ್ತಿ ಏನೂ ವಿಷಯ ಸಿಗುತ್ತಿರಲಿಲ್ಲ. ಅಮ್ಮ ಇದ್ದ ವಾರ್ಡಿನ ಡಾಕ್ಟರು ಆರನೆಯ ದಿನ ಬೆಳಿಗ್ಗೆ ಫೋನು ಮಾಡಿ, ಹೊಸ ಐ-ಪ್ಯಾಡುಗಳನ್ನು ಕೊಂಡಿರುವುದಾಗಿಯೂ, ಪೇಷಂಟುಗಳ ಜೊತೆಗೆ ಮನೆಯವರು ಫೇಸ್ ಟೈಮಿನಲ್ಲಿ ಮಾತಾಡಬಹುದೆಂದೂ ತಿಳಿಸಿದಾಗ ಒಂದು ದೊಡ್ಡ ಚಿಂತೆ ಕಳೆದಂತಾಗಿ ಪಪ್ಪನ ಕಣ್ಣಿನಲ್ಲಿ ಜೀವ ಮರಳಿ ಬಂದಂತೆನಿಸಿತು. ಅವತ್ತೆಲ್ಲ ಮಾತೂ ಜಾಸ್ತಿಯಾಗಿದೆ ಅನ್ನಿಸಿದ್ದೂ ನಿಜ. ಸಂಜೆ ಅಮ್ಮನನ್ನು ನೋಡಿದಾಗ ಪಪ್ಪ ಅತ್ತೇಬಿಡುತ್ತನೆನ್ನಿಸಿದರೂ, ಅದು ನನ್ನ ಕಣ್ಣೀರನಿಂದ ಮಂಜಾಗಿದ್ದ ದೃಷ್ಟಿಯ ದೋಷವಿರಬಹುದೇ ಅಂದುಕೊಂಡು ಸುಮ್ಮನಾಗಿದ್ದೆ.

ಹಾಫ್ ಟರ್ಮ್ ರಜೆ ಮುಗಿದು, ಶಾಲೆ ಶುರುವಾಗಿ ಎರಡು ದಿನ ಆಗಿತ್ತು. ಮಂಗಳವಾರ ಮಧ್ಯಾಹ್ನ ಮನೆಗೆ ಬಂದಾಗ ಪಪ್ಪ ತಲೆಯನ್ನು ಎರಡೂ ಕೈಗಳಲ್ಲಿ ಹಿಡಿದುಕೊಂಡು ಸೋಫಾದ ಮುಂದೆ ನೆಲದ ಮೇಲೆ ಕೂತಿದ್ದ. ಒಂದು ಕ್ಷಣ ಎದೆ ಧಸ್ಸೆಂದರೂ, ಎಷ್ಟು ಸಾಧ್ಯವೋ ಅಷ್ಟು ನಾರ್ಮಲ್ ಧ್ವನಿಯಲ್ಲಿ “ಏನಾಯ್ತು ಪಪ್ಪಾ?” ಅಂದರೂ, ಆ ಧ್ವನಿ ನನ್ನದೇನಾ ಆನ್ನುವ ಅನುಮಾನ ಬರದೇ ಇರಲಿಲ್ಲ.

ಅಳು ತಡೆಯುತ್ತ ಗೊಗ್ಗರು ಧ್ವನಿಯಲ್ಲಿ “ಅಮ್ಮನಿಗೆ ಸೀರಿಯಸ್ಸು ಪುಟ್ಟಾ; ಇವತ್ತು ಬೆಳಿಗ್ಗೆ ಐಸಿಯುಗೆ ಶಿಫ್ಟ್ ಮಾಡಿದ್ದರು. ಈಗ ವೆಂಟಿಲೇಟರ್ ಮೇಲೆ ಹಾಕಬೇಕೇನೋ ಅನ್ನುವ ಮಾತಾಡಿದರು ಡಾಕ್ಟರು …” ಇಷ್ಟು ಹೇಳುವಲ್ಲಿಗೆ ಮುಗಿಯಿತು ಪಪ್ಪನ ಹಿಡಿತ, ಕಣ್ಣೀರಿನ ಕಟ್ಟೆ ಒಡೆಯಿತು, ತಲೆಯನ್ನು ಕೆಳಗೆ ಮಾಡಿ ಕುಳಿತ. ಸದ್ದಿಲ್ಲದೇ ಅಳುತ್ತಿದ್ದಾನೆ ಅನ್ನುವುದನ್ನು ಮುಚ್ಚಿಡಲಾರದೇ ಹೋದವು ಆಗಾಗ ಬರುತ್ತಿದ್ದ ಬಿಕ್ಕುಗಳು. ನಾನಂತೂ ಪಪ್ಪನ ಭುಜದ ಮೇಲೆ ತಲೆಯಿಟ್ಟು ಜೋರಾಗಿಯೇ ಅತ್ತೆ, ಅದುವರೆಗೆ ಹಿಡಿದಿಟ್ಟಿದ್ದ ದುಃಖವನ್ನೆಲ್ಲ ಹೊರಹಾಕಿದೆ.

ಅಲ್ಲಿಂದ ನಮ್ಮ ಜೀವನ ಯಾಂತ್ರಿಕವಾಯಿತು. ಅಳು ಕಡಿಮೆಯಾಗಿ, ಮೌನ ಹೆಚ್ಚಿತು. ಪಪ್ಪನ ಕೆಲಸ, ನನ್ನ ಶಾಲೆ, ಅಮ್ಮನ ಐಸಿಯು ಹೋರಾಟ ಮುಂದುವರೆದೆವು. ದಿನಕ್ಕೆರಡು ಬಾರಿ ಫೇಸ್ ಟೈಮಿನಲ್ಲಿ ಅಮ್ಮನನ್ನು ನೋಡುವುದು, ಬದುಕಿರುವಳೆನ್ನುವ ಸಮಾಧಾನಕ್ಕಿಂತ ಹತ್ತಾರು ಟ್ಯೂಬುಗಳನ್ನು ಚುಚ್ಚಿಸಿಕೊಂಡು ಸೊರಗಿ ಅಸ್ಥಿಪಂಜರದಂತಾಗಿರುವ ಅವಳನ್ನು ನೋಡುವ ಸಂಕಟವೇ ಹೆಚ್ಚಾಯಿತು. ಎಷ್ಟೋ ಸಲ ತಪ್ಪಿಸಿದರೆ ದುಃಖ ಕಡಿಮೆಯಾಗಬಹುದೇನೋ ಅನ್ನಿಸಿದರೂ, ಪಪ್ಪ ಒಬ್ಬನೇ ಆಗುತ್ತಾನಲ್ಲ ಅನ್ನುವ ಕಾರಣಕ್ಕೆ ನನ್ನನ್ನು ನಾನು ಎಳೆದುಕೊಂಡು ಹೋಗುತ್ತಿದ್ದೆ. ಉಳಿದೆಲ್ಲ ಹೊತ್ತು ಪಪ್ಪ ತನ್ನ ಕೆಲಸದಲ್ಲಿ ಕಳೆದರೆ, ಪರೀಕ್ಷೆ ಹತ್ತಿರ ಬಂದಂತೆ ನನ್ನ ಓದಿನ ಭರದಲ್ಲಿ ನಾನು ಮುಳುಗಿದೆ. ಆಗೀಗ ಅಡಿಗೆ ಮಾಡುವಾಗ, ಪ್ರತಿಸಲ ಊಟ ತಿಂಡಿ ಮಾಡುವಾಗ ಪಪ್ಪ ಮತ್ತು ನಾನು ಜೊತೆಯಾಗಿಯೇ ಮಾಡುವುದು. ಅಮ್ಮನ ನಗು, ಮಾತುಕತೆ, ಹಾಸ್ಯದ ಬಗ್ಗೆ ಮಾತಾಡುತ್ತಾ ಅವಳೊಂದಿಗೆ ಕಳೆದ ಒಳ್ಳೆಯ ದಿನಗಳ ನೆನಪನ್ನು ಹಸಿರಾಗಿಡುವ ಪ್ರಯತ್ನ ನಡೆಸುತ್ತಿದ್ದೆವು. ಅಜ್ಜಿ-ತಾತಗೂ ವಿಷಯ ಹೇಳಿಯಾಗಿತ್ತು; ಅವರೂ ಈ ನಡುವೆ ಪರಿಸ್ಥಿತಿಯೊಡನೆ ಹೊಂದಾಣಿಕೆ ಮಾಡಿಕೊಂಡು ದೂರದೇಶದಲ್ಲಿ ಇಬ್ಬರೇ ಇರುವ ನಮ್ಮ ಧೈರ್ಯಗೆಡದಂತೆ ನೋಡುವ ಯತ್ನದಲ್ಲೇ ಇರುತ್ತಿದ್ದರು.

ಈಸ್ಟರ್ ರಜೆ ಮುಗಿದು ಎರಡು ವಾರವಾಗಿತ್ತು. ಅಮ್ಮನಿಗೆ ಟ್ರೆಕಿಯಾಸ್ಟಮಿ (ಉಸಿರಾಟಕ್ಕೆ ಅನುಕೂಲವಾಗುವಂತೆ ಕತ್ತಿನಲ್ಲಿ ಮುಂದೆ ಗಾಯಮಾಡಿ ನೇರವಾಗಿ ವಿಂಡ್ ಪೈಪಿಗೆ ಆಕ್ಸಿಜೆನ್ ಕೊಳವೆ ಹಾಕುವುದೆಂದು ಗೂಗಲ್ ಮಾಡಿದಾಗ ಗೊತ್ತಾಗಿದ್ದು) ಮಾಡಿ ಮೂರು ದಿನಕ್ಕೆ, ಶುಕ್ರವಾರ ಮಧ್ಯಾಹ್ನ ಐಸಿಯು ಟೀಮಿನೊಂದಿಗೆ ನಮ್ಮ ಮಾತಿದೆ ಅಂತ ಪಪ್ಪ ಹೇಳಿದ್ದ. ಎಲ್ಲ ಫೋನು-ಕಂಪ್ಯೂಟೆರಿನ ಮೇಲೆಯೆ ಮಾತುಕತೆ. ಡಾಕ್ಟರರು ತಮ್ಮ ಪ್ರಯತ್ನ ತಾವು ಮುಂದುವರೆಸುವುದಾಗಿ ಭರವಸೆ ಕೊಡುತ್ತಲೇ, ಯಾವಾಗ ಬೇಕಾದರೂ ಜೀವ ಹೋಗಬಹುದೆಂದು ಹೇಳಿದಾಗ ಪಪ್ಪನ ಮುಖ ಕಲ್ಲಿನಂತಾಗಿದ್ದರೆ, ನನ್ನ ಹೊಟ್ಟೆಯಲ್ಲಿ ಯಾರೋ ಕೈ ಹಾಕಿ ಹಿಂಡಿದಂತಾಗಿತ್ತು.

ಮೇ ಎರಡನೆಯ ವಾರ, ನನ್ನ ಫೈನಲ್ ಪರೀಕ್ಷೆಗಳು ಶುರುವಾಗಲು ಐದು ದಿನವಿರಬೇಕಿತ್ತು. ಅಮ್ಮ ಇನ್ನೂ ಐಸಿಯುನಲ್ಲೇ ಇದ್ದಳು. ಅವತ್ತು ಬೆಳಿಗ್ಗೆ ಎದ್ದಾಗ, ಪಪ್ಪ ಯಾರೊಡನೆಯೋ ಜೋರಾಗಿ ಮಾತಾಡುತ್ತಿರುವುದು ಕೇಳಿಸಿತು. ಈ ನಡುವೆ ಕೇಳಿಲ್ಲದ ಆಶಾವಾದದ ಛಾಯೆ ಇದ್ದಂತನಿಸಿ, ಓಡಿ ಕೆಳಗಿಳಿದು ಬಂದೆ. ಐಸಿಯು ಡಾಕ್ಟರು ಹೊಸದೊಂದು ಟ್ರೀಟ್ಮೆಂಟ್ ಟ್ರಯಲ್ ಶುರುವಾಗಿದೆಯೆಂದೂ, ಅಮ್ಮನನ್ನು ಅದರಲ್ಲಿ ಸೇರಿಸಿದ್ದಾರೆಂದೂ ಹೇಳುತ್ತಿದ್ದರು. ಆ ಟ್ರಯಲ್ಲಿನ ಮೊದಮೊದಲಿನ ಫಲಿತಾಂಶಗಳು ಚೆನ್ನಾಗಿದ್ದುದು ಕಂಡುಬರುತ್ತಿದೆಯೆಂದೂ ಆದರೆ ಇನ್ನೂ ಆರಂಭಿಕ ಹಂತದಲ್ಲಿರುವುದರಿಂದ ಹೇಗಾಗುವುದೋ ಕಾಯ್ದು ನೋಡಬೇಕೆಂದೂ ಒತ್ತಿ ಒತ್ತಿ ಹೇಳಿದರು. ನಮ್ಮಿಬ್ಬರಿಗಂತೂ ಕತ್ತಲೆಯ ಗುಹೆಯ ಕೊನೆಯಲ್ಲೊಂದು ಬೆಳಕಿನ ಕಿರಣ ಕಂಡಂತಾಗಿತ್ತು.

ಇದಾಗಿ ಎರಡು ವಾರಕ್ಕೆಲ್ಲ ಅಮ್ಮನ ಪರಿಸ್ಥಿತಿ ಸುಧಾರಿಸಲಾರಂಭಿಸಿ, ಅಮ್ಮ ವೆಂಟಿಲೇಟರಿನಿಂದ ಹೊರಬಂದಳು. ಪಪ್ಪ ಮತ್ತೆ ಮಾತಾಡಲಾರಂಭಿಸಿದ. ದಿನಕ್ಕೆರಡು ಬಾರಿ “ಏನನ್ಕೊಂಡೀಯೇ ನಿಮ್ಮಮ್ಮನ್ನ? ಅವಳ ಜೀವನೋತ್ಸಾಹ ನೋಡಿನೇ ನಾನು ಮದುವೆಯಾಗಿದ್ದು” ಅನ್ನಲಾರಂಭಿಸಿದ. ನನಗೂ ಪರೀಕ್ಷೆಯಿಲ್ಲದೇ ಶಾಲೆಯ ಅಸೆಸ್ಮೆಂಟಿನ ಮೇಲೆಯೇ ನಿರ್ಧಾರವಾಗಲಿರುವ ಫಲಿತಾಂಶವನ್ನು ಎದುರಿಸುವ ಧೈರ್ಯ ಬಂತು ನಿಜವಾಗಿಯೂ. ನಿರೀಕ್ಷಿತ ಗ್ರೇಡುಗಳು ಬಂದದ್ದು ಸಮಾಧಾನವನ್ನೇ ತಂದಿತು ಕೂಡ.
ಅಮ್ಮ ವಾರ್ಡಿಗೆ ಹೋಗಿ, ಹತ್ತು ದಿನವಿದ್ದು, ಡಿಸ್ಚಾರ್ಜ್ ಆಗಿ ಮನೆಗೆ ಬಂದು ಒಂದು ವಾರವಾಯಿತು. ಇನ್ನೂ ಅಮ್ಮನಿಗೆ ಬಹಳವೇ ನಿಶ್ಶಕ್ತಿಯಿದೆಯಾದರೂ ನಮ್ಮಿಬ್ಬರಲ್ಲಿ ಬಲಬಂದಿದೆ. ನನ್ನ ಶೈಕ್ಷಣಿಕ ವರ್ಷ ಮುಗಿದಿರುವುದರಿಂದ ಮನೆಯಲ್ಲೇ ಉಳಿದು ಅಮ್ಮನ ಜೊತೆ ಸಮಯ ಕಳೆಯಲು ಸಾಧ್ಯವಾಗುತ್ತಿದೆ. ಅಮ್ಮನಿಗೆ ಮಾತಾಡಲೂ ಇನ್ನೂ ಸುಸ್ತಿದ್ದರೂ, ನಾನೇ ಇಬ್ಬರ ಪರವಾಗಿ, ತಿಂಗಳುಗಟ್ಟಲೆ ಆಡದೆ ಉಳಿದ ಮಾತುಗಳನ್ನು ಆಡಿ ಮುಗಿಸುತ್ತಿರುವೆ. ಅಮ್ಮನೂ ಕ್ಯಾಚಪ್ ಮಾಡುತ್ತಿದ್ದಾಳೆ. ಮನೆಯಲ್ಲಿ ಮತ್ತೆ ಗದ್ದಲವಿದೆ, ನನ್ನದು ಮತ್ತು ಪಪ್ಪನದು ಸಧ್ಯಕ್ಕೆ.

************************************************************
20.08.2020
ಬಿದ್ದು ಹೊರಳಾಡಿ ಅತ್ತುಬಿಡಬಬೇಕನ್ನಿಸುತ್ತದೆ, ಎಷ್ಟು ಬಾರಿ. ದುಃಖ ಉಮ್ಮಳಿಸಿ ಬಂದರೂ, ಕಣ್ಣಲ್ಲಿ ನೀರು ಬರುತ್ತಿಲ್ಲ. ಗುಂಡು ಬಡಿದು ಬಿದ್ದು ಬೇಟೆಗಾರನ ದಾರಿ ನೋಡುತ್ತಿರುವ ಜಿಂಕೆಗೂ ಹೀಗೇ ಅನ್ನಿಸುತ್ತಿರಬೇಕು. ಅಮ್ಮ ಹತ್ತಿರದವಳಾದರೂ, ನನ್ನ ಮನಸ್ಸಿಗೆ ಬೇಜಾರಾದರೆ ನಾನು ಓಡುತ್ತಿದ್ದುದು ಅಪ್ಪನ ಹತ್ತಿರವೇ. ಕಳೆದ ಆರು ವಾರಗಳಲ್ಲಿ ಎಷ್ಟು ಬಾರಿ ಪಪ್ಪಾ ಅಂದು ಅವರ ರೂಮಿನ ಕಡೆ ಹೋಗಿಯಾಗಿದೆ. ಉತ್ತರವಿಲ್ಲದೇ ವಾಪಸು ಬರುವಾಗ, ಅಮ್ಮನ ರೂಮಿನ ಕಡೆಗೆ ಹಾಯ್ದ ಕಣ್ಣುಗಳು ತುಂಬಿ ಬರುತ್ತವೆ. ಮೊದಮೊದಲು ಆ ಕಣ್ಣುಗಳು ತುಂಬಿ ಕೆನ್ನೆಯ ಮೇಲೆ ಇಳಿದ ಕಣ್ಣೀರಿನ ಗುರುತು ಮುಖ ತೊಳೆದರೂ ಹೋಗುವುದಿಲ್ಲ ಅನ್ನಿಸಿತ್ತು. ಆಮೇಲಾಮೇಲೆ, ಕಣ್ಣಲ್ಲಿ ದುಃಖ ಸಂಕಟ ಕಾಣುತ್ತವಷ್ಟೆ. ಫೈರ್ ಪ್ಲೇಸಿನ ಮೇಲಿರುವ ಹಿತ್ತಾಳೆಯ ಪಾಲಿಶ್ ಮಾಡಿದ ತಂಬಿಗೆಯಲ್ಲಿ ಕಾಣುವ ಕಣ್ಣುಗಳು ನನ್ನವೇನಾ ಅನ್ನುವಷ್ಟು ನಿಸ್ಸತ್ವವಾಗಿವೆ. ಈ ವರ್ಷದ ನವೆಂಬರಿಗೆ ಅಮ್ಮ-ಪಪ್ಪನ ಮದುವೆಯ ಸಿಲ್ವರ್ ಜುಬಿಲಿ ಆಗಬೇಕಿತ್ತು.

ಹೋದ ಸಲದ ಎಂಟ್ರಿಯಲ್ಲಿ ಅಮ್ಮ ಕರೆದಳೆಂದು ಹೋಗಿದ್ದೆ ಅಂದೆನಲ್ಲ, ಅದರ ಬಗ್ಗೆ ಹೇಳಬೇಕು; ಯಾಕೆಂದರೆ ಈಗ ಹಿಂದೆ ನೋಡಿದಾಗ ಅದೊಂದು ಟರ್ನಿಂಗ್ ಪಾಯಿಂಟ್ ಇನ್ ಟೈಮ್ ಅನ್ನಿಸುತ್ತಿದೆ.

ಅಮ್ಮ ಕರೆದದ್ದು, ಪಪ್ಪ ಟಾಯ್ಲೆಟ್ಟಿಗೆ ಹೋಗಿ ಸ್ವಲ್ಪ ಹೊತ್ತಾಯ್ತು, ಅಷ್ಟು ಹೊತ್ತು ಹೋಗೋದಿಲ್ಲ ಅವರು ಸಾಧಾರಣವಾಗಿ ಕರಿ ಒಂದ್ಸಲ ಅಂತ ಹೇಳ್ಳಿಕ್ಕೆ. ಗೆಸ್ಟ್ ರೂಮಿನ ಆನ್ ಸ್ವೀಟ್ ಬಾಗಿಲು ಬಡಿದು “ಪಪ್ಪ, ಆರ್ ಯೂ ಓಕೇ? ಅಮ್ಮ ಕೇಳಿದ್ಲು” ಅಂದೆ. “ಬಂದೆ, ಬಂದೆ; ಟೂ ಮಿನಿಟ್ಸ್” ಅಂದ ಪಪ್ಪ.

ಅಮ್ಮನ ಕಣ್ಣಿಗೆ ಪಪ್ಪ ಸೊರಗಿರುವುದು ಮನೆಗೆ ಬಂದ ಮೊದಲ ದಿನವೇ ಬಿದ್ದಿದ್ದು ನನಗೆ ಆಶ್ಚರ್ಯವೇನಾಗಿರಲಿಲ್ಲ. ಅಮ್ಮ ಅನ್ನುವುದಕ್ಕೆ ಮುನ್ನ ನನಗೆ ಹೊಳೆದಿರಲಿಲ್ಲವಾದರೂ, ಹೌದಲ್ಲ ಅನ್ನಿಸದೇ ಇರಲಿಲ್ಲ. ಆದರೆ, ಹಿಂದಿನ ಕೆಲ ತಿಂಗಳುಗಳ ಪರಿಸ್ಥಿತಿಯ ಅರಿವಿನಿಂದ, ಅದಕ್ಕೆ ಕಾರಣ ಹುಡುಕುವ ಅಗತ್ಯವಿರಲಿಲ್ಲ ಅಮ್ಮನಿಗೆ.

ಜುಲೈ 15, ಸೋಮವಾರ: ಸತತ ಒಂದುವಾರದಿಂದ ಮೋಡ, ಮಳೆಗಳಿದ್ದು ವಾತಾವರಣ ಕತ್ತಲು-ಕತ್ತಲಾಗಿದ್ದುದು, ಅವತ್ತು ಬೆಳಗ್ಗೆ ಬಿಸಿಲೊಡೆದಿತ್ತು. ಅಮ್ಮ ಬೆಳಗ್ಗೆ ಎದ್ದು ನಮ್ಮ ಫಸ್ಟ್ ಫ್ಲೋರಿನ ಲ್ಯಾಂಡಿಂಗಿನಲ್ಲಿರುವ ದೊಡ್ಡ ಕಿಟಕಿಯ ಪರದೆ ತೆಗೆದು, ಬಿಸಿಲಿನಲ್ಲಿ ಪುಸ್ತಕ, ಕಾಫಿ ಕಪ್ಪಿನೊಡನೆ ಕಾಲುಚಾಚಿಕೊಂಡು ಜೋಕಾಲಿಯಲ್ಲಿ ಕುಳಿತಿದ್ದಳು. ಪಪ್ಪ ಬಂದು ಎಂದಿನಂತೆ ಅವಳ ತೊಡೆಯ ಮೇಲೆ ತಲೆಯಿಟ್ಟು ಮಲಗಿ, ಮುಖಕ್ಕೆ ಬಿಸಿಲು ಬಿದ್ದು ಕಣ್ಣು ಮುಚ್ಚಿದ. ಒಂದು ಕ್ಷಣ ಮುಖ ನೋಡಿದ ಅಮ್ಮ ಪುಸ್ತಕ ಪಕ್ಕಕ್ಕಿಟ್ಟು “ಎಲ್ಲಿ ಕಣ್ ತೆಗೀರಿ” ಎದ್ದು ಹಲ್ಲುಜ್ಜುತ್ತಿದ್ದ ನನಗೂ ಕೇಳಿಸಿತು. ಟವೆಲಿನಿಂದ ಒರೆಸಿಕೊಳ್ಳುತ್ತ ಬಂದು ನೋಡಿದೆ – ಪಪ್ಪನ ಮುಖ-ಕಣ್ಣು ಹಳದಿಯಾಗಿದೆಯಲ್ಲ ಅನಿಸಿ, ಅಮ್ಮನ ಕಡೆ ನೋಡಿದೆ. ಅಮ್ಮ ತನ್ನ ವೃತ್ತಿಸಹಜ ಪ್ರತಿಕ್ರಿಯೆಯಂತೆ, ಅಲ್ಲೇ ಪಪ್ಪನ ದೈಹಿಕ ಪರೀಕ್ಷೆ ಶುರುಮಾಡಿಬಿಟ್ಟಿದ್ದಳು. ಗಂಟೆ ಎಂಟಾಗುತ್ತಲೇ ಅವಳೇ ಆಸ್ಪತ್ರೆಗೆ ಫೋನು ಮಾಡಿ, ಅಪಾಯಿಂಟ್ಮೆಂಟ್ ತೊಗೊಳ್ಳುವುದಲ್ಲದೆ, ಗುರುತಿನ ಗ್ಯಾಸ್ಟ್ರೋಎಂಟರಾಲಜಿಸ್ಟರೊಡನೆಯೂ, ರೇಡಿಯಾಲಜಿಸ್ಟ್ ಜೊತೆಗೂ ಮಾತನಾಡಿ ಅರ್ಜೆಂಟಾಗಿ ಸಿಟಿ ಸ್ಕ್ಯಾನ್ ಇತ್ಯಾದಿ ಪರೀಕ್ಷೆಗಳ ತಯಾರಿಯನ್ನೂ ಮಾಡಿದಳು.
ಅಲ್ಲಿಂದ ಎರಡು ವಾರದಲ್ಲಿ ಎಲ್ಲ ಮುಗಿದೇ ಹೋಯಿತು. ಪಪ್ಪನಿಗೆ ಗಾಲ್ ಬ್ಲಾಡರಿನ ನಳಿಗೆಯ (ಬೈಲ್ ಡಕ್ಟ್) ಕೊಲಾಂಜಿಯೋಕಾರ್ಸಿನೋಮಾ ಅನ್ನುವ ಕ್ಯಾನ್ಸರ್ ಆಗಿದೆ, ಅದು ತುಂಬಾ ಮುಂದುವರೆದು ಎಲ್ಲೆಡೆ ಹಬ್ಬಿದೆಯೆಂದೂ ಕೇಳಿ ಅರ್ಥಮಾಡಿಕೊಳ್ಳುವುದರಲ್ಲೇ ಅಪ್ಪ ಹೊರಟೇಬಿಟ್ಟ. ಆಸ್ಪತ್ರೆಗೆ ಸೇರಿದ ಅಪ್ಪನ ಮುಖವನ್ನು ನಾನು ಮತ್ತೆ ನೋಡಿದ್ದು ಫ್ಯುನರಲ್ ಪಾರ್ಲರಿನಲ್ಲಿಯೇ. ಅಮ್ಮ ಆಸ್ಪತ್ರೆಯಲ್ಲಿದ್ದಾಗ ನಾನು ಹಿಡಿದಿಟ್ಟಿದ್ದ ದುಃಖವೆಲ್ಲ ಉಮ್ಮಳಿಸಿ ಬಂದು, ಅವಳ ಭುಜದ ಮೇಲೆಯೇ ತಲೆಯಿಟ್ಟು ಬಿಕ್ಕಿಬಿಕ್ಕಿ ಅತ್ತುಬಿಟ್ಟೆ.

“ವೈ ಅಸ್, ಅಮ್ಮಾ, ವೈ ಅಸ್? ವಾಟ್ ಹಾವ್ ವಿ ಡನ್ ಟು ಡಿಸರ್ವ್ ದಿಸ್?”

*****************************************************
10.09.2020
ನನಗೆ ಮೆಡಿಕಲ್ ಸೀಟು ಸಿಕ್ಕಿದೆ. ಎಲ್ಲೇ ಇರಲಿ ಪಪ್ಪನಿಗೆ ಖುಶಿಯಿದೆ ಅಂತ ಖಂಡಿತ ಹೇಳಬಲ್ಲೆ. ಅಮ್ಮನಿಗೂ ಸಹ ಹಾಗೇ ಅನ್ನಿಸುತ್ತದೆಯಂತೆ, ಅವಳೇ ಎರಡು-ಮೂರು ಸಲ ಹೇಳಿದ್ದಾಳೆ. ಪಪ್ಪ ಇನ್ನೂ ಮನೆಯಲ್ಲೇ ಇದ್ದಾನೆ, ಫೈರ್ ಪ್ಲೇಸಿನ ತಂಬಿಗೆಯಲ್ಲಿ. ಮನದಲ್ಲಂತೂ ಸರಿಯೇ. ಈ ವರ್ಷದ ರೋಲರ್ ಕೋಸ್ಟರ್ ಘಟನೆಗಳಿಂದಾಗಿ ನಾನು ಡೆಫರ್ಮೆಂಟ್ ತೊಗೊಂಡು, ಮುಂದಿನ ವರ್ಷಕ್ಕೆ ಯುನಿವರ್ಸಿಟಿ ಸೇರಿಕೊಳ್ಳಲು ನಿರ್ಧರಿಸಿರುವೆ. ನಾನು ಅಮ್ಮ ಸೇರಿ ಎಲ್ಲೆಡೆ ಸುತ್ತಾಡುವ, ಪಪ್ಪನಿಗೆ ಇಷ್ಟವಾದದ್ದನ್ನು (ಅವನ ಬಕೆಟ್ ಲಿಸ್ಟ್ ಅಂತೆ) ನೋಡುವ ಪ್ಲಾನ್ ಹಾಕಿದ್ದೇವೆ. ನಮ್ಮ ಪಟ್ಟಿಯಲ್ಲಿ ನ್ಯೂ ಡೆಲ್ಲಿಗೆ ಹೋಗಿ ಅಲ್ಲಿ ರಸ್ತೆಬದಿಯ ಪಾನಿಪೂರಿ, ಮಸಾಲಪೂರಿ, ಮೊಮೊ ತಿನ್ನುವುದಿದೆ; ಬೆಂಗಳೂರಿನ ವಿದ್ಯಾರ್ಥಿ ಭವನದಲ್ಲಿ ದೋಸೆ ಕಾಫಿ ಸವಿಯುವುದಿದೆ; ತ್ರೀ ಈಡಿಯಟ್ಸ್ ಸಿನಿಮಾದಲ್ಲಿ ತೋರಿಸುವ ಲದ್ದಾಖ್ ಸರೋವರದ ದಂಡೆಯ ಮೇಲೆ ಓಡುವುದಿದೆ; ಯಾಣಕ್ಕೆ, ಸೇಂಟ್ ಮೇರೀಸಿಗೆ ಹೋಗಿ, ಯಾರೂ ಇಲ್ಲದಿರುವಾಗ ಜೋರಾಗಿ ಕೂಗುವುದಿದೆ; ಅಜ್ಜಿ-ತಾತನ ಜೊತೆ ಅಡುಗೆಮನೆಯಲ್ಲಿ ನೆಲದ ಮೇಲೆ ಕೂತು ಊಟ ಮಾಡುತ್ತಾ ಗಂಟೆಗಟ್ಟಲೆ ಹರಟೆ ಹೊಡೆಯುವುದಿದೆ. ಆ ಪಟ್ಟಿ ನಾವು ಹೋಗುವವರೆಗೂ ಬೆಳೆಯುವ ಸಾಧ್ಯತೆಯಂತೂ ಖಂಡಿತ ಇದೆ. ಇದೆಲ್ಲವನ್ನೂ ಪಪ್ಪನ ಅಸ್ಥಿಯನ್ನ ಶ್ರೀರಂಗಪಟ್ಟಣದ ಕಾವೇರಿಯಲ್ಲಿ, ಅವನ ಇಷ್ಟದ ಗೋಸಾಯಿ ಘಾಟಿನ ನದಿಯಲ್ಲಿ ಹರಿಯಬಿಡುವ ಮುನ್ನ ಮಾಡಬೇಕಿದೆ.
ಅಮ್ಮ ಊಟಕ್ಕೆ ಕರೀತಿದ್ದಾಳೆ. ಮತ್ತೆ ಸಿಗೋಣ.

*******************************************************

ಕಥೆ ಹಾಗೂ ಪುಸ್ತಕ ಪಯಣ

ನಲ್ಮೆಯ ಓದುಗ ಬಳಗಕ್ಕೆ ನಮಸ್ಕಾರ.

“ಅಮಾವಾಸ್ಯೆಯ ಮಧ್ಯರಾತ್ರಿ..ಗವ್ ಎನ್ನುವ ಕಾರಿರುಳು..ನಿರ್ಜನ ರಸ್ತೆಗಳು..ಆಗೊಮ್ಮೆ,ಈಗೊಮ್ಮೆ ಊಳಿಡುವ ನಾಯಿಗಳನ್ನು ಬಿಟ್ಟರೆ ಉಳಿದಂತೆ ಹೆಪ್ಪುಗಟ್ಟಿದ ಸ್ಮಶಾನ ಮೌನ.. ಇದ್ದಕ್ಕಿದ್ದಂತೆಯೇ ‘ಘಲ್ ಘಲ್’ ಗೆಜ್ಜೆಯ ದನಿ..’ ಇಂಥ ವರ್ಣನೆ ಓದುತ್ತಿದ್ದಂತೆಯೇ ಎಂಥ ಗಟ್ಟಿಗರ ಎದೆಯೂ ‘ಝಲ್'ಎನದೇ ಇರದು. ದೆವ್ವ-ಭೂತಗಳ ಬಗ್ಗೆ ನಂಬುಗೆ ಇರಲಿ, ಬಿಡಲಿ ಅದು ಬೇರೆ ಮಾತು. ಆದರೆ ಅದರ ಭಯದ ಸುಳಿಯಲ್ಲಿ ಒಮ್ಮೆಯಾದರೂ ಸಿಲುಕದ,ಬೆಚ್ಚಿಬೀಳದ ನರಮನುಷ್ಯನಾರೂ ಇರಲಾರ. ಚಿಕ್ಕಂದಿನಲ್ಲಿ ಅಮ್ಮ-ಅಜ್ಜಿಯರ ಮಡಿಲಲ್ಲೋ, ಸೆರಗ ಒತ್ತಾಸೆಯಲ್ಲೋ ಕುಳಿತು ಕೇಳಿದ ಏಳುಮಕ್ಕಳ ತಾಯಿ, ‘ನಾಳೆ ಬಾ’ ಓದಿ ಮರಳಿ ಹೋಗುವ ಮೋಹಿನಿ, ಮರದ ಮೇಲಿನ ಬ್ರಹ್ಮ ಪಿಶಾಚಿ, ವೇಷ ಬದಲಿಸಿ ಯಾಮಾರಿಸುವ ಚಾಣಾಕ್ಷ ದೆವ್ವಗಳು..ಇಂಥ ಥರಾವರಿ ಭೂತ-ದೆವ್ವಗಳ ಪ್ರಪಂಚಕ್ಕೆ ನಮ್ಮ ಬಾಲಿವುಡ್ ನ ಕೊಡುಗೆಯೂ ಉಲ್ಲೇಖನಾರ್ಹ.

ಅಂಥದೇ ಸಸ್ಪೆನ್ಸ್ ತುಂಬಿದ ನೀಳ ಕಥೆಯೊಂದನ್ನು ನಿಮ್ಮೆಲ್ಲರ ಓದಿಗಾಗಿ ತಂದಿದ್ದಾರೆ ಶಿವ ಮೇಟಿಯವರು. ರಾತ್ರಿ ಮನೆಯವರೆಲ್ಲ ಮಲಗಿದ ಮೇಲೆ ಟೇಬಲ್ ಲ್ಯಾಂಪಿನ ಮಂದ ಬೆಳಕಿನಲ್ಲಿ ಈ ಕಥೆಯನ್ನೋದಿ. ನಿಮ್ಮ ಹಿಂದೆ ಯಾರೋ ಬಂದು ನಿಂತಂತಾಗಿ ನೀವು ಬೆಚ್ಚಿಬಿದ್ದರೆ ‘ಸಂಪಾದಕರು’ ಹೊಣೆಗಾರರಲ್ಲ.

‘ಪುಸ್ತಕಕ್ಕೊಂದು ಕತೆ’ ಸರಣಿಯಲ್ಲಿ ಪ್ರಮೋದ್ ಲಕ್ಕುಂಡಿಯವರು ಚಂದಾಮಾಮ,ಕಾಮಿಕ್ಸ್ ನಿಂದ ಸೋವಿಯತ್ ರಷ್ಯಾದವರೆಗೆ ಪುಸ್ತಕಗಳ ಮಾಯಾಲೋಕದಲ್ಲಿ ನಮ್ಮನ್ನು ಸುತ್ತಾಡಿಸಿಕೊಂಡು ಬಂದಿದ್ದಾರೆ.ಬಾಲ್ಯದಿಂದ ಇಂದಿನವರೆಗೂ ಬೆನ್ನಟ್ಟಿಕೊಂಡು ಬಂದ ಪುಸ್ತಕ ನೆಂಟಿನ ಬಗ್ಗೆ ಆಪ್ತವಾಗಿ ಬರೆದುಕೊಂಡಿದ್ದಾರೆ.

ಓದಿ ನಿಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲು ಮರೆಯದಿರಿ.

~~ಸಂಪಾದಕಿ

ಯಾರಿವಳು?? ( ವೊ ಕೌನ್ ಥಿ ? )

ಕೊರೆಯುವ ಛಳಿಯಲ್ಲಿ ಮುಸುಕಿದ ಮಂಜು. ಸ್ಕಾಟ್ಲೆಂಡಿನ ಅಪ್ಪಟ  ಮುಂಜಾವು. ಅಕ್ಟೋಬರ ತಿಂಗಳಿನ ಕೊನೆಯ ವಾರವಾಗಿರಬಹುದು --- 
ಮಗಳನ್ನು ಶಾಲೆಗೆ ಬಿಟ್ಟು, ಆಸ್ಪತ್ರೆಯತ್ತ ಕಾರನ್ನು ಓಡಿಸುತ್ತಿದ್ದೆ
ಬಲ ತಿರುವಿನಲ್ಲಿ ಕಾರನ್ನು ಹೊರಳಿಸಿ ಇನ್ನೇನು ಮುಖ್ಯ ರಸ್ತೆಯನ್ನು ಸೇರಬೇಕು, ಅಷ್ಟರಲ್ಲಿಯೇ ಧಕ್ಕನೆ ಯಾರೋ ಕಾರಿನ ಮುಂದೆ ಬಂದರು. ಪ್ರಾಣ ಭೀತಿ ಇಲ್ಲದವರೆಂದು ಬೈದುಕೊಂಡು ಕಾರನ್ನು ನಿಲ್ಲಿಸಿದೆ. ಅವಳೊಬ್ಬಳು ಅಂದಾಜು ಮೂವತ್ತರ ಪ್ರಾಯದ ಹೆಣ್ಣುಮಗಳು . ಏನನ್ನು ಹೇಳಲಿಲ್ಲ ಆದರೆ ಮುಖದ ಮೇಲೆ ಒಂದು ಮುಗುಳ್ನಗೆ ಚೆಲ್ಲಿ ಹಾಗೆಯೇ ಹೋಗಿ ಬಿಟ್ಟಳು.ಮುಸುಕಿದ ಮಂಜಿನಲ್ಲಿ ಮುಖ ಸರಿಯಾಗಿ ಕಾಣಿಸದಿದ್ದರೂ , ವೇಷ ಭೂಷಣದಲ್ಲಿ ಮಾತ್ರ ಭಾರತೀಯಳಂತೆ ಕಂಡಳು . ಯಾರೋ ಹೊಸದಾಗಿ ಬಂದಿರಬಹುದೆಂದು ಎಂದುಕೊಂಡು ಮುಂದೆ ಸಾಗಿದೆ .
ಅದೊಂದು ಶನಿವಾರದ ಮುಂಜಾನೆ . ಆಕಾಶವೆಲ್ಲ ಬಯಲಾಗಿತ್ತು ಸೂರ್ಯನು ನಿಖರವಾಗಿ ಹೊಳೆಯುತ್ತಿದ್ದರೂ, ಬಿಸಿಲು ಮಾತ್ರ ಮೈಗೆ ತಟ್ಟುತ್ತಿರಲಿಲ್ಲ . ವರ್ಷದ ಕೊನೆಯ ಗಾರ್ಡನಿಂಗ್ ಮಾಡಿಬಿಡೋಣವೆಂದುಕೊಂಡೆ . ಸೋಮಾರಿಯಾಗಿದ್ದ ಮಕ್ಕಳನ್ನು ಕರೆದುಕೊಂಡು ಮನೆಯ ಮುಂದಿನ ಗುಲಾಬಿ ತೋಟಕ್ಕೆ ಬಂದೆ.
ಮುಂದಿನ ದ್ವಾರದ (gate) ಮುಂದೆ ಯಾರೋ ನಿಂತಿದ್ದರು . ದಿಟ್ಟಿಸಿ ನೋಡಿದಾಗ ಕಂಡಿದ್ದು ಅದೇ ಹೆಣ್ಣು ಮಗಳು , ಹಿಂದಿನ ದಿನ ಕಾರಿನ ಮುಂದೆ ಬಂದವಳು . ನನ್ನತ್ತ ಕೈ ಬೀಸಿ ಹಾಗೆ ನಿಂತಿದ್ದಳು . ಇತ್ತೀಚಿನ ದಿನಗಳಲ್ಲಿ ತುಂಬಾ ಭಾರತೀಯರು ನಾವಿದ್ದ ಊರಿಗೆ ವಲಸೆ ಬಂದು ನೆಲೆಸಿದ್ದಾರೆ. ಈ ವರ್ಷ ನನ್ನ ಮಗಳ ಶಾಲೆಯಲ್ಲಿ ಭಾರತೀಯ
ಮೂಲದ ಮಕ್ಕಳ ಸಂಖ್ಯೆ ಜಾಸ್ತಿಯಾಗಿದೆ . ಇವಳು ಯಾರೋ ಮಗಳ ಸ್ನೇಹಿತೆಯ ತಾಯಿಯಾಗಿರಬಹುದೆಂದು ಅಂದುಕೊಂಡೆ . ಮಗಳನ್ನು ಕೇಳಿದೆ ಅವಳು ಗೊತ್ತೇನೆಂದು?. ಮಗಳು ಅಂದಳು - “ಯಾರು ? ಎಲ್ಲಿ ಇದ್ದಾರೆ? ನನಗೆ ಯಾರೂ ಕಾಣಿಸುತ್ತಿಲ್ಲ . ದ್ವಾರದ ಮುಂದೆ ಯಾರೂ ಇಲ್ಲಾ” . ಹೌದು ತಿರುಗಿ ನೋಡಿದಾಗ ಯಾರೂ ಇಲ್ಲಾ. ನನಗೆ ವಿಚಿತ್ರವೆನಿಸಿತು , ಒಂದು ಕ್ಷಣದಲ್ಲಿ ಅವಳು ಎಲ್ಲಿ ಮಾಯವಾದಳೆಂದು . ತಕ್ಷಣವೇ ದ್ವಾರದತ್ತ ಹೋದೆ , ಆಚೆ ಈಚೆ ನೋಡಿದರೂ ಅವಳ ಸುಳಿವು ಸಿಗಲಿಲ್ಲ . ದ್ವಾರದ ಹತ್ತಿರ ಗುಲಾಬಿಯ ಕಂಟಿಯನ್ನು ಕತ್ತರಿಸುತ್ತಿದ್ದ ಇನ್ನೊಬ್ಬ ಮಗಳನ್ನೂ ಸಹ ಕೇಳಿದೆ . ಅವಳೂ ಸಹ ಯಾರನ್ನೂ ನೋಡಲಿಲ್ಲವೆಂದಳು . ನನ್ನನ್ನು ಅಣುಕಿಸುವಂತೆ - " ಅಪ್ಪಾ ಇತ್ತೀಚಿಗೆ ನೀನು ಬಹಳೇ ಸಸ್ಪೆನ್ಸ್ ಸಿನೆಮಾ ನೋಡುತ್ತಿರುವೆ ಅದಕ್ಕೆ ನಿನಗೆ ಹೀಗಾಗಿರಬಹುದು " ಎಂದು ನಕ್ಕಳು.
ಅವಳ ಮಾತಿಗೆ ಮುಗುಳ್ನಕ್ಕು ಸುಮ್ಮನಾದೆ. ತಲೆಯಲ್ಲಿ ಮಾತ್ರ ಯಕ್ಷಪ್ರಶ್ನೆ ಕಾಡತೊಡಗಿತು . ಒಂದು ಕ್ಸಣದಲ್ಲಿ ಅವಳು ಕಣ್ಮರೆಯಾಗಲು ಹೇಗೆ ಸಾಧ್ಯವೆಂದು . ಒಳಗಿನ ಮನಸು ಹೇಳಿತು - 'ಇದು ಪರಿಚಯದ ಮುಖವೆಂದು '. ಅವಳ ವಿಚಾರದಲ್ಲಿಯೇ ಇಡೀ ದಿನ ಕಳೆದು ಹೋಯಿತು ಆದರೆ ಉತ್ತರ ಮಾತ್ರ ಸಿಗಲೇ ಇಲ್ಲ .
ಮಾರನೆಯ ದಿನ ಭಾನುವಾರ . ಹೆಂಡತಿ ಮತ್ತು ಮಕ್ಕಳಿಗೆ ಹತ್ತಿರದ ' ಸಿಲ್ವರ್ ಬರ್ನ್ ' ಶಾಪಿಂಗ್ ಸೆಂಟರ್ ಗೆ ಹೋಗುವ ಬಯಕೆ . ಎಲ್ಲರೂ ಸೇರಿ ಸಿಲ್ವರ್ ಬರ್ನ್ ಗೆ ಬಂದದ್ದಾಯಿತು . ಹೆಂಡತಿಗೆ ವಿಂಡೋ ಶಾಪಿಂಗ್ ಬಹಳೇ ಇಷ್ಟ . ದಿನವೆಲ್ಲಾ ಶಾಪಿಂಗನಲ್ಲಿ ಕಳೆದು ಕೊನೆಗೆ ಏನನ್ನೂ ಕೊಳ್ಳದೇ ಬರಿಗೈಯ್ಯಲ್ಲಿ ಮರಳುತ್ತಾಳೆ . ಮೊದ ಮೊದಲು ಸಿಟ್ಟು ಬರುತಿತ್ತು , ಈಗ ಅಭ್ಯಾಸ ಆಗಿ ಹೋಗಿದೆ . ಅವಳನ್ನು ಅಂಗಡಿಯ ಒಳಗೆ ಬಿಟ್ಟು ನಾನು ಹೊರಗೆ ನಿಲ್ಲುವದು ಸಹಜವಾಗಿದೆ. ಇನ್ನೇನು ಅವಳನ್ನು ಮಕ್ಕಳ ಜೊತೆ ಅಂಗಡಿಯ ಒಳಗೆ ಬಿಡಬೇಕು ಎನ್ನುವಷ್ಟರಲ್ಲಿಯೇ , ನಿನ್ನೆ ಕಂಡವಳು ಮತ್ತೆ ಕಾಣಿಸಿಕೊಂಡಳು . ಸ್ವಲ್ಪ ದೂರದಲ್ಲಿಯೇ ನಿಂತಿದ್ದ ಅವಳು ಮುಗುಳ್ನಗೆ ಬೀರಿ ಮತ್ತೆ ಕೈ ಬೀಸಿದಳು . ಈ ಸಲ ಮಾತ್ರ ಅವಳನ್ನು ಮಾತನಾಡಿಸದೆ ಬಿಡಲೇಬಾರದೆಂದುಕೊಂಡು ಅವಳತ್ತ ನಡೆದೆ .
ಹತ್ತಿರ ಹೋಗಿ - ಹಲೋ ಎಂದೆ . ಮುಗುಳ್ನಗುತ್ತಾ ಅವಳು ಎಂದಳು - "ಏನು ಶಂಕ್ರಣ್ಣ ಹೇಗೆ ಇದ್ದಿಯಾ ? ಗುರುತು ಸಿಗಲಿಲ್ಲವೆ?". ನಾನು ಮಾತ್ರ ತಬ್ಬಿಬ್ಬಾದೆ , ಏನು ಹೇಳಬೇಕೆಂದು ತೋರಲಿಲ್ಲ . ಅಷ್ಟರಲ್ಲಿಯೇ ಅವಳೆಂದಳು - "ನಾನು ಮಂಜು , ನಿಮ್ಮೂರವಳು ". ಈಗ ಖಾತ್ರಿಯಾಯಿತು , ಇವಳು ನಿಜವಾಗಿಯೂ ಪರಿಚಯದವಳೆಂದು . ಒಂದು ಕ್ಷಣ ತಲೆ ಪರಚಿಕೊಂಡ ಮೇಲೆ ಗೊತ್ತಾಯಿತು ಇವಳು ನಮ್ಮೂರ ಆಚಾರ್ಯರ ಮಗಳು ಮಂಜು ಎಂದು . "ಹೇಗೆ ಇದ್ದಿಯಾ ? ಎಲ್ಲಿ ಇದ್ದಿಯಾ ? ಯಾವಾಗ ಈ ದೇಶಕ್ಕೆ ಬಂದೆ ? " ಎಂದು ಒಂದೇ ಉಸುರಿನಲ್ಲಿ ಕೇಳಿದ್ದಾಯಿತು . " ಬಂದು ಸ್ವಲ್ಪ ದಿನವಾಯಿತು , ಇಲ್ಲಿಯೇ ಹತ್ತಿರದಲ್ಲಿ ಇದ್ದೇನೆ " ಎಂದಳು . "ಎಲ್ಲಿ ಅಡ್ರೆಸ್ ಕೊಡಮ್ಮಾ , ಭೇಟಿಯಾಗೋಣವೆಂದೆ "
"೨೪೮ ಮೇಯರ್ನ್ ರೋಡ್ , ಗಿಫ್ನಾಕ್" ಎಂದಳು .
"ನಮ್ಮ ಮನೆಗೆ ಬಹಳ ಹತ್ತಿರದಲ್ಲಿ ಇದ್ದೀಯ ಎರಡು ಮೈಲ್ ದೂರ, ಇರು ನನ್ನ ಹೆಂಡತಿ ಮತ್ತು ಮಕ್ಕಳನ್ನು ಪರಿಚಯಿಸುವೆ " ಎಂದೆ . ಹೆಂಡತಿಯ ಹತ್ತಿರ ಬಂದೆ . ಹೆಂಡತಿ ಅಂದಳು - "ಏನ್ರಿ ಅಷ್ಟು ದೂರ ಹೋಗಿ ನಿಮ್ಮಷ್ಟಕ್ಕೆ ನೀವೇ ಏನು ಮಾತ್ನಾಡ್ತಾ ಇದ್ರಿ " ಎಂದಳು .
“ಆಲ್ಲ ಕಣೆ ಅವಳು ನಮ್ಮೂರ ಆಚಾರ್ಯರ ಮಗಳು ಮಂಜು . ಅವಳ ಜೊತೆಗೆ ಮಾತನಾಡ್ತಾ ಇದ್ದೆ. ಬಾ ಪರಿಚಯ ಮಾಡಿಸ್ತೀನಿ " ಎಂದೆ . "ಅಲ್ಲಿ ಯಾರಾದರು ಇದ್ದರೆ ತಾನೆ ನೀವು ಪರಿಚಯ ಮಾಡಿಸೋದು , ನಿಮ್ಮ ಭ್ರಮೆ " ಎಂದಳು . ತಾವೂ ಯಾರನ್ನು ನೋಡಲಿಲ್ಲವೆಂದು ಮಕ್ಕಳೂ ಸಹ ತಾಯಿಯ ಜೊತೆ ಕಟ್ಟಿದರು . ತಿರುಗಿ ನೋಡಿದರೆ ಅಲ್ಲಿ ಯಾರೂ ಆಲ್ಲ . ಅರೆ ಇವಳ , ಸ್ವಲ್ಪವೂ ತಡೆಯದೆ ಎಲ್ಲಿ ಇವಳು ಮಾಯವಾದಳು ಎಂದುಕೊಂಡೆ . ಹೆಂಡತಿ ಏನೊ ಗೊಣಗುಟ್ಟುತ್ತಾ ಅಂಗಡಿಯ ಒಳಗೆ ಹೋದಳು . "ಇಲ್ಲೇ ಇರಿ , ಮತ್ತೆ ಇಲ್ಲದವಳನ್ನು ಹುಡುಕುತ್ತಾ ಬೇರೆ ಕಡೆ ಎಲ್ಲೂ ಹೋಗಬೇಡಿ . ಕಳೆದ ಸಲ ಊರಿಗೆ ಹೋದಾಗ ಸೋಮೇಶ್ವರ್ ದೇವರ ಗುಡಿಗೆಹೋಗಲಿಲ್ಲ ( ಸೊಗಲ್ ಸೋಮೇಶ್ವರ ನಮ್ಮ ಮನೆ ದೇವರು ) ಅದಕ್ಕೆ ಏನೇನೋ ಆಗ್ತಾ ಆದೆ " ಎಂದು ಅನ್ನುತ್ತಾ ಮಕ್ಕಳೊಡನೆ ಅಂಗಡಿಯ ಒಳಗೆ ಹೋದಳು . ನಾನು ಮಾತ್ರ ದಂಗಾಗಿದ್ದೆ . ಅವಳು ಸತ್ಯವಾಗಿಯೂ ನಮ್ಮೂರ ಮಂಜು ಹಾಗಾದರೆ ಅವಳು ಬೇರೆಯವರಿಗೆ ಏಕೆ ಕಾಣಿಸ್ತಿಲ್ಲ ?. ಏಕೆ ತಟ್ಟನೆ ಮಾಯವಾಗುತ್ತಿದ್ದಾಳೆ ? ಆ ಶಕ್ತಿ ಅವಳಿಗೆ ಹೇಗಿದೆ ? ಇದರಲ್ಲಿ ಏನೋ ರಹಸ್ಯ ಇದೆ , ಇದನ್ನು ಕಂಡು ಹಿಡಿಯಲೇ ಬೇಕೆಂದುಕೊಂಡೆ .

( ಮುಂದಿನ ಸಂಚಿಕೆಯಲ್ಲಿ ಮುಂದುವರೆಯುತ್ತದೆ.)

~~ಶಿವ ಮೇಟಿ

ಪುಸ್ತಕಲೋಕ ಪರ್ಯಟನ

ಚಿತ್ರಕೃಪೆ-ಅಂತರ್ಜಾಲ
ಪುಸ್ತಕದ ಬಗ್ಗೆ ಬರೆಯಲು ಅನಿವಾಸಿಯಲ್ಲಿ ಬಂದ ಸಂದೇಶ ಓದಿದೆ, ನಮ್ಮ ಸಂಪಾದಕರು ಸುಂದರವಾಗಿ ಹೇಳುತ್ತಾರೆ "ಪ್ರತಿ  ಪುಸ್ತಕದಲ್ಲೂ ಒಂದು ಕಥೆಯಿದ್ದಂತೆ ನಮ್ಮ ನೆಚ್ಚಿನ ಅಥವಾ ನೆನಪಿನ ಪುಸ್ತಕಕ್ಕೂ ಒಂದು ಕಥೆಯಿದೆ". ನಾನು ಇದನ್ನು ಓದಿದಾಗ ಅನಿಸಿದ್ದು, "ಪ್ರತಿ ನೆನಪಿನ ಪುಸ್ತಕಕ್ಕೂ ಒಂದು ಕಥೆಯಿದ್ದಂತೆ, ನಮ್ಮ ಜೀವನದ ಪ್ರತಿ ಹಂತದಲ್ಲೂ ಪುಸ್ತಕದ (ಪುಸ್ತಕಗಳ) ನೆನಪಿದೆ. ಅದೂ ಒಂದು ಕಥೆ ಆಗಬಹುದು". ನಾನು ಒಂದು ಪುಸ್ತಕ, ಅಂದರೆ ನೆನಪಿನ ಪುಸ್ತಕದ ಬಗ್ಗೆ ಮಾತನಾಡಿಲ್ಲ ಆದರೆ ನನ್ನ ನೆನಪಿನಲ್ಲಿರುವ ಅಥವಾ ನನ್ನೊಡನೆ ಇಂದಿಗೂ ನಂಟು ಬಿಡದ ಪುಸ್ತಕಗಳ ಬಗ್ಗೆ ಬರೆಯುತ್ತಿದ್ದೇನೆ. 

ಬಾಲ್ಯದಲ್ಲಿ ತಂದೆ, ತಾಯಿ ನಮಗೆ ಓದಿದ/ ಓದಿಸಿದ ಚಂದಮಾಮ, ಬೊಂಬೆಮನೆ, ಬಾಲಮಿತ್ರ ನಮಗೆ ಸಣ್ಣ ಕಥೆ ಹೇಳುತ್ತಾ ನಮಗೆ ಪುಸ್ತಕ ಲೋಕವನ್ನು ತೆರೆದು ಇಟ್ಟಿತು. ಇವುಗಳ ಜೊತೆ ಸೇರಿದ್ದು ಮತ್ತು ಇಷ್ಟವಾದದ್ದು "ಭಾರತ ಭಾರತಿ" ಪುಸ್ತಕಗಳು. ಮಕ್ಕಳಿಗೆ ಪುಸ್ತಕ ಓದುವ ಹವ್ಯಾಸ ಬೆಳೆದರೆ ಅದು ಅವರ ಕ್ರಿಯಾಶೀಲ ಚಿಂತನೆಗೆ ಹಾದಿ ಮಾಡಿಕೊಡುತ್ತದೆ. ಈ ಪುಸ್ತಕಗಳ ಮೂಲಕ ವ್ಯಕ್ತಿ ಚಿತ್ರಣಗಳ ಜೊತೆ, ರಾಜ, ರಾಣಿಯರ ಕಥೆ, ಮಾಂತ್ರಿಕರ ಕಥೆ, ವಿಕ್ರಮ್ ಬೇತಾಳ ಕಥೆ ಹೀಗೆ ನಮ್ಮ ವಿಚಾರ ಶಕ್ತಿಗೆ ಒಂದು ಒಳ್ಳೆಯ ವ್ಯಾಯಾಮ ಆಯಿತು.

ಮುಂದೆ ಸಾಗಿದಂತೆ ಅಮರ ಚಿತ್ರ ಕಥಾ, ಇಂದ್ರಜಾಲ ಕಾಮಿಕ್ಸ್ ನಮ್ಮನ್ನು ಸೆಳೆಯ ತೊಡಗಿದವು. ನಮ್ಮ ಜನಪ್ರಿಯ ಮಾಂತ್ರಿಕ ಮಾಂಡ್ರೇಕ್, ಬಲಶಾಲಿ ಲೋಥರ್, ಬಹಾದೂರ್, ಝೋರೋ, ನಡೆದಾಡುವ ಭೂತಪ್ಪ ಫ್ಯಾಂಟಮ್, ಸಾಯರ್, ಗಾರ್ಥ್, ಫ್ಲಾಶ್ ಗೋರ್ಡಾನ್ ಇವರೆಲ್ಲರನ್ನು ಮರೆಯಲು ಸಾಧ್ಯವೇ ಇಲ್ಲ. ಈಗಿನ ಮಾರ್ವೆಲ್ ನಾಯಕರು, ಹ್ಯಾರಿ ಪಾಟರ್ ಆಗಿನ ಸಮಯದಲ್ಲಿ ಇಂದ್ರಜಾಲ ಕಾಮಿಕ್ಸ್ ತಂದ ಮೋಡಿಗೆ ಸಮ ಆಗಲಿಕ್ಕಿಲ್ಲ. ಮಾಂತ್ರಿಕ ಮಾಂಡ್ರೇಕ್ ಮುಂದುವರೆದಿದ್ದರೆ ಲೀ ಫಾಕ್ ಅವರನ್ನು ಜನರು ಸರಳವಾಗಿ ಮರೆಯುತ್ತಿರಲಿಲ್ಲ. ಜೀವನದಲ್ಲಿ ಏನಾದರೂ ಮಹತ್ತರವಾದದ್ದನ್ನು ಕಳೆದುಕೊಂಡಿದ್ದೆಂದರೆ ೩೦೦-೪೦೦ ಇಂದ್ರಜಾಲ ಕಾಮಿಕ್ಸ್ ನನ್ನ ಅಣ್ಣ ಮತ್ತು ನಾನು ಕೂಡಿ ಇಟ್ಟಿದ್ದು, ಸ್ಥಳ ಬದಲಾವಣೆಯಲ್ಲಿ ಕಳೆದದ್ದು ಸಿಗಲಿಲ್ಲ.

ಇದರಂತೆ ನೀವೆಲ್ಲ ಅಂಕಲ್ ಅನಂತ್ ಪೈ ಅವರ ಟಿಂಕಲ್ ಓದಿರಬಹುದು, ಓದಿದ್ದರೆ ನಿಮ್ಮ ಕಣ್ಣ ಮುಂದೆ ಬರುವುದು ಕಾಲಿಯಾ ಕಾಗೆ, ಸುಪಂದಿ, ತಂತ್ರಿ ಮಂತ್ರಿ, ಶಿಕಾರಿ ಶಂಬು ಮುಂತಾದವರು. ಪುಸ್ತಕದಲ್ಲಿ ಕಥೆಗಳ ಜೊತೆ ಸಾಮಾನ್ಯ ಜ್ಞಾನ ಪರೀಕ್ಷಿಸುವ ಒಗಟುಗಳು, ವಿಜ್ಞಾನದ ವಿವರಗಳು ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಓದಲು ಪ್ರೇರಣೆ ಕೊಡುತ್ತಿತ್ತು. ಆ ಸಮಯದ ಪುಸ್ತಕಗಳ ಬಗ್ಗೆ ಹೇಳುತ್ತಾ ಹೋದರೆ ಬರೆಯುವುದು ಮುಗಿಯುವುದೇ ಇಲ್ಲ, ಆರ್ಚೀ ಕಾಮಿಕ್ಸ್, ರೀಡರ್ಸ್ ಡೈಜೆಸ್ಟ್, ವಿಸ್ಡಮ್ ಹಾಗೆ ಬರೆಯುತ್ತ ಇರಬೇಕು ಅನಿಸುತ್ತದೆ. (ಟಿಂಕಲ್ ನಿಮಗೆ ಈಗ ಆನ್ಲೈನ್ ಸಿಗುತ್ತದೆ, ಸುಪಂದಿ ಚಿತ್ರಣ (ವೀಡಿಯೋಸ್) ನೋಡುವುದು ತಪ್ಪಿಸಬೇಡಿ. ಮನ ಬಿಚ್ಚಿ ನಕ್ಕು ಬಿಡಿ).

ಆ ಸಮಯದಲ್ಲಿ ವಿಜ್ಞಾನದ ವಿಷಯ ಓದಲು ನನ್ನನ್ನು ಕೈ ಮಾಡಿ ಕರೆದದ್ದು "ಬಾಲ ವಿಜ್ಞಾನ", ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಪ್ರಕಟಿಸಿದ ಮಾಸ ಪತ್ರಿಕೆ ಇದು. ಒಂದು ರುಪಾಯಿಗೆ ಸಿಗುತ್ತಿದ್ದ ಈ ಪುಸ್ತಕ ವಿಜ್ಞಾನದ ಕೌತುಕವನ್ನುನಮ್ಮೆದುರಿಗೆ ತೆರೆದು ಇಡುತ್ತಿತ್ತು. ಒಂದು ಸಂತೋಷದ ಸಂಗತಿ ಎಂದರೆ ಇದು ಈಗ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಅವರ ಅಂತರ್ಜಾಲದ ತಾಣದಲ್ಲಿ ಉಚಿತವಾಗಿ ಪಿ ಡಿ ಎಫ್ ಮಾದರಿಯಲ್ಲಿ ಲಭ್ಯವಿದೆ ( https://krvp.in/bala-vijnana-magazine.php ).

ಬಾಲ್ಯದಲ್ಲಿ ನನಗೆ ಅಚ್ಚರಿ ಮೂಡಿಸುತ್ತಿದ್ದ ವ್ಯಕ್ತಿ ಎಂದರೆ ನನ್ನ ಅಣ್ಣ (ಪ್ರಸನ್ನ), ನಾನು ೬ ನೆಯ ತರಗತಿಯಲ್ಲಿ ಇದ್ದೆ (ಅಣ್ಣ ೮ ನೆಯ ತರಗತಿ), ನಾವು ನ್ಯೂಸ್ ಮೇಲೆ ನಿಬಂಧ ಬರೆಯಬೇಕಿತ್ತು, ಬರೆದೆವು. ನನ್ನ ಅಣ್ಣನ ಪ್ರಬಂಧ ಉತ್ತಮವಾಗಿತ್ತು, ಅವನ ಪ್ರಬಂಧ ಆರಂಭ ಆಗಿದ್ದು NEWS ಎಂದರೆ ನಾರ್ತ್, ಈಸ್ಟ್, ವೆಸ್ಟ್ ಮತ್ತು ಸೌತ್ ನಿಂದ ಮತ್ತು ಉಳಿದ ವಿಷಯ ಅತ್ಯುತ್ತಮ ನ್ಯೂಸ್ ಮತ್ತು ವಿಷಯಗಳ ಬಗ್ಗೆ ಇತ್ತು. ಇಂಟರ್ನೆಟ್, ಟಿ ವಿ ಇರದ ಕಾಲ ಆದರೂ ಒಳ್ಳೆಯ ಲೇಖನ ಹುಟ್ಟಲು ಕಾರಣ ಗೆಳೆಯರಾದ ಪುಸ್ತಕಗಳು.

ಇನ್ನು ನಾವು ಇಡೀ ವರ್ಷದಲ್ಲಿ ಕಾಯುತ್ತ ಕೂಡುವುದು ಬೇಸಿಗೆಯ ರಜೆಗಾಗಿ, ಆ ಎರಡು ತಿಂಗಳು ನಮಗೆ ಹಬ್ಬ. ಯಾಕೆಂದರೆ ಎಲ್ಲ ಮೊಮ್ಮಕ್ಕಳು ಅಜ್ಜನ ಮನೆಯಲ್ಲಿ ಸೇರುವ ಸಮಯ. ಎಲ್ಲರೂ ಸೇರಿ ಹತ್ತು ಹಲವಾರು ನೆಚ್ಚಿನ ಕೆಲಸ ಮಾಡುತ್ತಿದ್ದೆವು. ಅದರಲ್ಲಿ ಒಂದು ಪ್ರತಿ ದಿನ ಸಾಯಂಕಾಲ ವಿದ್ಯಾರ್ಥಿ ವಾಚನಾಲಯಕ್ಕೆ ಭೇಟಿ ಕೊಡುವುದು, ಅಲ್ಲಿ ಪ್ರತಿ ಗೋಡೆ ಮೇಲೆ ಎಲ್ಲ ಪುಸ್ತಕಗಳ ಮುಖಪುಟ ಅಂಟಿಸುತ್ತಿದ್ದರು. ಆಗಿನ ನಮ್ಮ ಅಚ್ಚುಮೆಚ್ಚಿನ ಬರಹಗಾರರು ಜಿಂದೆ ನಂಜುಂಡಸ್ವಾಮಿ, ಟಿ ಕೆ ರಾಮರಾವ್, ಸುದರ್ಶನ ದೇಸಾಯಿ, ಕನ್ನಡದ ಪ್ರಖ್ಯಾತ ಪತ್ತೇದಾರಿ ಬರಹಗಾರರು. ಇವುಗಳ ನಡುವೆ ಸಾಮಾಜಿಕ ಮತ್ತು ಇತರೆ ಕಾದಂಬರಿಗಳನ್ನು ಓದುವ ಸಂತೋಷ ಕೂಡ ನಮಗೆ ಸಿಗುತ್ತಿತ್ತು. ನಮಗೆ ಜೇಮ್ಸ್ ಹಾಡ್ಲಿ ಚೇಸ್ ಪುಸ್ತಕ ಸಿಕ್ಕಿದ್ದು ಅದೇ ಸಮಯದಲ್ಲಿ (ಹೈಸ್ಕೂಲ್ ಪ್ರಾರಂಭದ ಸಮಯ), ಎಲ್ಲರ ಮುಂದೆ ಓದಿದರೆ ಎಲ್ಲಿ ಹಿರಿಯರು ಮಂಗಳಾರತಿ ಮಾಡುತ್ತಾರೋ ಎಂದು ಮಂಚದ ಕೆಳಗೆ ಮಲಗಿ, ಇಲ್ಲವೇ ಮೂಲೆಯಲ್ಲಿ ಕುಳಿತು ಓದುತ್ತಿದ್ದೆ. ಪತ್ತೇದಾರಿ ಪುಸ್ತಕ ಓದಿ ನಮ್ಮ ಮಕ್ಕಳ ಗುಂಪಿನಲ್ಲೇ ಕಥಾ ಸ್ಪರ್ಧೆ ನಾವೇ ನಡೆಸುತ್ತಿದ್ದೆವು. ಆ ಸಮಯ ಮರೆಲಾಗದು;ಮತ್ತೆ ಮರಳಿ ಬಾರದು. ಪತ್ತೇದಾರಿ ಕಾದಂಬರಿ ನಮ್ಮ ಮೇಲೆ ಎಂತಹ ಪರಿಣಾಮ ಬೀರಿತ್ತೆಂದರೆ, ನಮ್ಮ ಅಜ್ಜನ ಮನೆಯ ಪಕ್ಕದಲ್ಲಿ ಒಂದು ಬಿದ್ದ ಮನೆ ಇತ್ತು ಮತ್ತು ಮುಂದಿನ ಸಾಲಿನಲ್ಲಿ ಸರ್ಕಾರೀ ಹೆರಿಗೆ ಆಸ್ಪತ್ರೆ, ನಾವು ಬಿದ್ದ ಮನೆಯಲ್ಲಿ ಏನೋ ವಿಶೇಷ ಸಂಗತಿ ಇರಬಹುದು ಎಂದು ರಾತ್ರಿ ಕದ್ದು ನೋಡುತ್ತಿದ್ದೆವು. ಅದರ ಜೊತೆ ನಮಗೆ ಅನಿಸಿದ್ದು ಹೆರಿಗೆ ಸಮಯದಲ್ಲಿ ಜೀವ ಕಳೆದು ಕೊಂಡ ತಾಯಂದಿರು, ಮಕ್ಕಳು ದೆವ್ವ ಆಗಿ ಆಸ್ಪತ್ರೆಯ ಬೇವಿನ ಮರದಲ್ಲೋ, ಇಲ್ಲ ಹಿಂದಿನ ಖಾಲಿ ಜಾಗದಲ್ಲೋ ಇರುತ್ತಾರೆಂದು. ಅದನ್ನು ಗುಟ್ಟಾಗಿ ಪತ್ತೆ ಹಚ್ಚಲು ನಾವು ರಾತ್ರಿ ಕಿಡಕಿಯಲ್ಲಿ ಕಾಯುತ್ತಿದ್ದೆವು.

ಬಹಳ ಕೊರೆಯದೇ ಒಂದು ವಿಶೇಷ ಪುಸ್ತಕದ ಬಗ್ಗೆ ಬರೆಯಲು ಇಚ್ಚಿಸುತ್ತೇನೆ. ಸೋವಿಯೆತ್ ಪುಸ್ತಕಗಳ ಬಗ್ಗೆ ನೀವೆಲ್ಲ ಕೇಳಿರಬಹುದು, ಅವರ ಪುಸ್ತಕ ಮೇಳ ಬಂತೆಂದರೆ ಅದು ಜಾತ್ರೆ ನಮಗೆ, ಹೋಗಿ ಎಲ್ಲ ಪುಸ್ತಕ ಮುಟ್ಟಿ ನೋಡಿ, ಬಣ್ಣ ಬಣ್ಣದ ಚಿತ್ರಗಳನ್ನು ನೋಡಿ ಸಂತೋಷಿಸುತ್ತಿದ್ದೆವು. ಅದರಲ್ಲಿ ಮಿರ್ ಪಬ್ಲಿಷರ್ಸ್ ಅವರ ವಿಜ್ಞಾನ, ಗಣಿತ ಮತ್ತು ತಂತ್ರಜ್ಞಾನದ ಪುಸ್ತಕ ವಿಭಿನ್ನವಾಗಿರುತ್ತಿತ್ತು, ಅವರ ಕೆಲವು ಪುಸ್ತಕ ಇನ್ನೂ ನನ್ನಲ್ಲಿ ಇವೆ.ಮ ಯಾವುದೇ ವಿಷಯವನ್ನು ಸರಳವಾಗಿ, ಸಾಮಾನ್ಯರಿಗೆ ತಿಳಿಯುವಂತೆ ಇರುವ ಅವರ ಬರಹ ಓದುವದೇ ಒಂದು ಸುಗ್ಗಿ. ಅವರ ಪುಸ್ತಕಗಳನ್ನು ನೀವೂ ಓದಿ ಖುಷಿ ಪಡಿ ಎಂದು ಆರ್ಕೈವ್ ಕೊಂಡಿ ಕಳಿಸುತ್ತಿದ್ದೇನೆ - https://archive.org/details/mir-titles

ಇನ್ನು ಸುಧಾ, ತರಂಗ, ಪ್ರಜಾಮತ, ಮಲ್ಲಿಗೆ, ತುಷಾರ, ಮಯೂರ, ರಾಗಸಂಗಮ ಎಲ್ಲರೂ ಓದಿಯೇ ಇರುತ್ತೀರಾ, ಅವನ್ನೂ ಮರೆಯಬಾರದು ಎಂದು ಅವುಗಳ ಹೆಸರನ್ನೂ ಬರೆದೆ.

ಪುಸ್ತಕದ ನಂಟು ಇನ್ನೂ ನನ್ನೊಂದಿಗೆ ಇದೆ, ಈಗ ವಿವಿಡ್ಲಿಪಿಯ ಉದ್ದೇಶಗಳೊಂದಿಗೆ. ನಿಮ್ಮೆಲ್ಲರ ಪುಸ್ತಕಗಳ ನೆನಪು ನನ್ನ ನೆನಪಿನ ಕಂತೆ ಅಂತೆಯೇ ಇರಬಹುದು. ನೆನಪುಗಳು ಮಧುರ, ಮಧುರ... ನೆನೆದಷ್ಟೂ ಅತಿ ಮಧುರ. ಪುಸ್ತಕಾರ್ಪಣಮಸ್ತು

~~ಪ್ರಮೋದ್ ಲಕ್ಕುಂಡಿ