ಕನ್ನಡ ಬಳಗ ದೀಪಾವಳಿ/ರಾಜ್ಯೋತ್ಸವ ನವೆಂಬರ್ ೨೦೨೫: ಅನಿವಾಸಿಯಿಂದ ಭೈರಪ್ಪನವರಿಗೆ ಶ್ರದ್ಧಾಂಜಲಿ

ಕನ್ನಡ ಬಳಗ, ಮಿಲ್ಟನ್ ಕಿನ್ಸ್ ನ ಅನಿಕೇತನ ಸಂಸ್ಥೆಯ ಜೊತೆ ಕೈ ಗೂಡಿಸಿ, ನವೆಂಬರ್ ೮ ರಂದು ದೀಪಾವಳಿ ಹಾಗು ರಾಜ್ಯೋತ್ಸವಗಳನ್ನು ಆಚರಿಸಿತು. ಕನ್ನಡ ಬಳಗದ ಕಾರ್ಯಕ್ರಮಗಳಲ್ಲಿ ‘ಅನಿವಾಸಿ’ ಯ ಸಮಾನಾಂತರ ಸಭೆ ಈಗ ಸಂಪ್ರದಾಯವೇ ಆಗಿದೆ. ಹೆಚ್ಚಾಗಿ, ಮುಖ್ಯ ಕಾರ್ಯಕ್ರಮದ ಉದ್ಘಾಟನೆ ಹಾಗೂ ಹಿತನುಡಿಗಳ ನಂತರದ ಸಮಯ ಇದಕ್ಕಾಗೇ ಮೀಸಲು. ಇತ್ತೀಚಿಗೆ ಕಾಣದ ಲೋಕಕ್ಕೆ ತೆರಳಿದ ಭೈರಪ್ಪನವರ ಅಗಲಿಕೆ ಕನ್ನಡಿಗರಿಗೆ ಅತೀವ ದುಃಖದಾಯಕ ಕಾರಣವಾಗಿದೆ. ಕನ್ನಡದ ಮಹಾನ್ ಕಾದಂಬರಿಕಾರರಲ್ಲಿ ಒಬ್ಬರಾದ ಭೈರಪ್ಪನವರಿಗೆ ಶ್ರದ್ಧಾಂಜಲಿ ಅರ್ಪಿಸುವುದೇ ಈ ಬಾರಿಯ ಅನಿವಾಸಿ ಕಾರ್ಯಕ್ರಮಕ್ಕೆ ತಕ್ಕುದಾದ ವಿಷಯವೆಂದು ಮೊದಲೇ ತೀರ್ಮಾನವಾಗಿತ್ತು. ಸದಸ್ಯರು ತಮಗೆ ಇಷ್ಟವಾದ ಕಾದಂಬರಿಯ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುವುದು ಮೊದಲ ಭಾಗ. ಮುಖ್ಯ ಅತಿಥಿಯಾಗಿ ಬರುವ ಶ್ರೀ. ಮತ್ತೂರು ನಂದಕುಮಾರರಿಂದ ಅವರ- ಭೈರಪ್ಪನವರ ಒಡನಾಟದ ವಿಶಿಷ್ಟ ಅನುಭವಗಳ ಅವಲೋಕನೆ ಎರಡನೇ ಭಾಗದಲ್ಲಿ ಎಂದು ನಿಶ್ಚಯಿಸಿದ್ದೆವು. ಕಾರ್ಯಕ್ರಮದ ಮುಖ್ಯ ಸಂಘಟಕರಾದ ಆನಂದ್ ಕೇಶವಮೂರ್ತಿ ಹಾಗೂ ಅನ್ನಪೂರ್ಣ ಆನಂದ್, ಮುಖ್ಯ ಅತಿಥಿಯವರ ಅನುಮೋದನೆ ಪಡೆದು ಯೋಜನೆಯನ್ನು ಕಾರ್ಯಗತಗೊಳಿಸಿದರು. ಈ ಸಂಚಿಕೆಯಲ್ಲಿ ಕಾದಂಬರಿಗಳ ವಿಶ್ಲೇಷಣೆ ಹಾಗೂ ಮತ್ತೂರರ ಭಾಷಣವದ ವಿವರಗಳಿವೆ. ಜೊತೆಯಲ್ಲೇ ಆತಿಥೇಯ ನಗರ ಮಿಲ್ಟನ್ ಕೀನ್ಸ್ ನವರೇ ಆದ ನಾಗರಾಜ ಬಸವರಾಜು ಅವರು ಬರೆದ ಇಡೀ ದಿನದ ಕಾರ್ಯಕ್ರಮಗಳ ವರದಿಯೂ ಇದೆ. ಕೊನೆಯಲ್ಲಿ ಡಾ . ಶ್ರೀವತ್ಸ ದೇಸಾಯಿ ಅವರು ಚಿತ್ರೀಕರಿಸಿದ ಕಾರ್ಯಕ್ರಮದ ಮುಖ್ಯಾಂಶಗಳ ಚಿಕ್ಕ ವಿಡಿಯೋವನ್ನು ನೋಡಲು ಮರೆಯದಿರಿ. -ರಾಮಶರಣ ಲಕ್ಷ್ಮೀನಾರಾಯಣ

ಎಲ್ಲರನ್ನು ಸ್ವಾಗತಿಸಿ, ಕಾರ್ಯಕ್ರಮದ ಪರಿಚಯವನ್ನು ಆನಂದ್ ಮಾಡಿಕೊಟ್ಟರು. ಮುಖ್ಯ ಅತಿಥಿಗಳ ಪರಿಚಯವನ್ನು ಶ್ರೀವತ್ಸ ದೇಸಾಯಿಯವರು ನೆರವೇರಿಸಿದರು. ಕೊನೆಯಲ್ಲಿ ಜಿ.ಎಸ್.ಶಿವಪ್ರಸಾದ್ ಸಾಂಗವಾಗಿ ಆಭಾರ ಮನ್ನಿಸಿದರು. 

ಪರ್ವ: ಸಾರ್ವಕಾಲಿಕ ನೆಚ್ಚಿನ ಕಾದಂಬರಿ – ಅನ್ನಪೂರ್ಣ ಆನಂದ್ 

ಚಿತ್ರಕೃಪೆ : ಕೇಶವ ಕುಲಕರ್ಣಿ

ಹೈಸ್ಕೂಲಿನಿಂದ ಕಾದಂಬರಿ ಓದುವ ಗೀಳು ಹತ್ತಿತ್ತು. ನನಗೆ ಮೊದಲು ಸಿಕ್ಕಿದ ಭೈರಪ್ಪನವರ ಕಾದಂಬರಿ ‘ವಂಶವೃಕ್ಷ’. ಅವರ ಬರಹದ ಶೈಲಿ, ಪಾತ್ರ ಪೋಷಣೆ, ಕಥೆಯ ಹಂದರ ನನ್ನ ಮನತಟ್ಟಿದವು. ‘ಧರ್ಮಶ್ರೀ’ ಹಾಗು ‘ದೂರಸರಿದರು’ ಗಳ ನಂತರ ಕೈಗೆಟುಕಿದ್ದು ‘ಪರ್ವ’. ಭಾರತೀಯ ಮಕ್ಕಳೆಲ್ಲ ಮಹಾಭಾರತದ ಕಥೆಗಳನ್ನು ಓದಿ, ಕೇಳಿಯೇ ಬೆಳೆಯುತ್ತಾರೆ. ಮಂತ್ರ ಪ್ರಭಾವದಿಂದ ಮಕ್ಕಳಾಗುವುದು, ಗಾಂಧಾರಿ ಹೊಟ್ಟೆ ಕಿವುಚಿಕೊಂಡು ನೂರು ಮಕ್ಕಳನ್ನು ಪಡೆಯುವುದು, ಕೃಷ್ಣನ ಚಮತ್ಕಾರಗಳು, ಇವೆಲ್ಲ ಕಲ್ಪನೆಗೆ ಮೀರಿದ ವಿಚಿತ್ರ ಭಾವನೆಗಳನ್ನು ಮೂಡಿಸುತ್ತಿದ್ದವು. ‘ಪರ್ವ’ ಮಹಾಭಾರತದ ಪಾತ್ರಗಳನ್ನೆಲ್ಲ ಮಾನವ ಸದೃಶಗೊಳಿಸುತ್ತವೆ. ಇಲ್ಲಿ ಚಮತ್ಕಾರಗಳಿಲ್ಲ. ಕೃಷ್ಣ, ಚಾಣಾಕ್ಷನೂ, ಮುತ್ಸದ್ದಿಯೂ ಆದ ವ್ಯಕ್ತಿ. ಕಥೆಯೂ  ಅಂತಃ ಸಂವಾದ, ಕೆದಕಿದ ನೆನಪು, ಪ್ರತಿಕ್ರಿಯೆಯ ರೂಪದಲ್ಲಿ ಸಾಗುವುದರಿಂದ, ಪುರಾಣವಾಗದೇ ಒಂದು ಐತಿಹಾಸಿಕ ಕಥೆಯಾಗಿ ಅನಾವರಣಗೊಳ್ಳುತ್ತದೆ. ಕುರುಕ್ಷೇತ್ರ ಯುದ್ಧ ವೈಭವೀಕರಣಗೊಳ್ಳದೇ ಕೊಳೆತು ನಾರುವ ಹೆಣದ ರಾಶಿ, ಯುದ್ಧ ತರುವ ಗೋಳು, ಹೊಲಸು ಇವನ್ನೆಲ್ಲ ತೋರುತ್ತ ಜಿಗುಪ್ಸೆ ಹುಟ್ಟುವಂತೆ ಮಾಡುತ್ತದೆ. ಸ್ತ್ರೀಪಾತ್ರಗಳಿಗೆ ಇಲ್ಲಿ ಪುರುಷ ಪಾತ್ರಗಳಿಗಿಂತಲೂ ಹೆಚ್ಚಿನ ಪ್ರಾಮುಖ್ಯತೆ ಇದೆ. ದ್ರೌಪದಿಯ ಪ್ರತೀಕಾರ, ಕುಂತಿಯ ಆಂತರಿಕ ತಲ್ಲಣ, ಗಾಂಧಾರಿಯ ಮಾತೃತ್ವದ ಬಂಧನ ಮನತಟ್ಟುತ್ತವೆ. ‘ಪರ್ವ’ ವನ್ನು ನಾನು ಹಲವು ಬರಿ ಓದಿದ್ದೇನೆ; ಪ್ರತಿಸಲವೂ ಹೊಸತನ್ನು ಕಂಡಿದ್ದೇನೆ. ಭೈರಪ್ಪನವರ ಕಾದಂಬರಿಗಳಲ್ಲೆಲ್ಲ ಇದು ನನ್ನ ಸಾರ್ವಕಾಲಿಕ ನೆಚ್ಚಿನ ಕೃತಿ.   

ಧರ್ಮಶ್ರೀ: ೬೦ರ ಭಾರತದ ಚಿತ್ರಣ – ಆನಂದ್ ಕೇಶವಮೂರ್ತಿ 

ನಾನು ‘ಧರ್ಮಶ್ರೀ’ಯನ್ನು ಮೊದಲ ಬಾರಿಗೆ ಓದಿದ್ದು ೩೫-೪೦ ವರ್ಷಗಳ ಹಿಂದೆ. ಕಳೆದ ವಾರ ಮತ್ತೊಮ್ಮೆ ಓದಿದಾಗ ಕಂಡದ್ದು ಹಲವು ಹೊಸ ವಿಷಯಗಳು. ೧೯೬೧ ರಲ್ಲಿ ಈ ಕೃತಿ ಬೆಳಕು ಕಂಡಿತು. ಹಾಗಾಗಿ ಇದನ್ನು ಭೈರಪ್ಪನವರು ೧೯೫೯ ಅಥವಾ ೧೯೬೦ರಲ್ಲಿ ಬರೆದಿರಬಹುದು. ಆಗ ಅವರಿಗೆ ೩೦ರ ಹರೆಯ. ಅಷ್ಟು ಚಿಕ್ಕ ವಯಸ್ಸಿನಲ್ಲೇ ಅವರು ಎಷ್ಟೊಂದು ಓದಿದ್ದರು, ಪ್ರೌಢಿಮೆ ಹೊಂದಿದ್ದರು ಎಂಬ ವಿಷಯ ಈ ಕಾದಂಬರಿಯನ್ನು ಓದಿದಾಗ ಅನಿಸುತ್ತದೆ. ೬೦ರ ದಶಕದ ಸಾಮಾಜಿಕ ಬದುಕು, ಕಿತ್ತು ತಿನ್ನುವ ಬಡತನ, ಹಿಂದೂ ಧರ್ಮದಲ್ಲಿ ತಂಡವವಾಡುತ್ತಿದ್ದ ಜಾತೀಯತೆ ಇವನ್ನೆಲ್ಲ ಧರ್ಮಶ್ರೀ ಪ್ರತಿಫಲಿಸುತ್ತದೆ. ಕಾದಂಬರಿಯ ಮೊದಲ ಪುಟಗಳು ಭೈರಪ್ಪನವರ ಮೈಸೂರಿಗೆ ವಿದ್ಯಾಭ್ಯಾಸಕ್ಕೆ ಬರುವವರೆಗಿನ ಆತ್ಮ ಕಥೆಯೇ ಎಂದು ತಮ್ಮ ‘ಭಿತ್ತಿ’ ಆತ್ಮಕಥೆಯಲ್ಲಿ ಹೇಳಿಕೊಂಡಿದ್ದಾರೆ. ಹಿಂದೂ ಕಥಾನಾಯಕ ಕ್ರಿಸ್ತ ಧರ್ಮಕ್ಕೆ ಮತಾಂತರ ಹೊಂದಿದ ಮೇಲೆ ಅವನಿಗಾಗುವ ತಳಮಳ, ಅದರ ಪರಿಣಾಮಗಳು ಇದರಲ್ಲಿ ಮನಮುಟ್ಟುವಂತೆ ಚಿತ್ರಿತವಾಗಿವೆ. ರಾಷ್ಟೀಯ ಸ್ವಯಂ ಸೇವಕ ಸಂಘದ ಧ್ಯೇಯೋದ್ದೇಶ, ಸಂಘವನ್ನು ಹತ್ತಿಕ್ಕಲು ಅಂದಿನ ಸರಕಾರ ಮಾಡಿದ ಪ್ರಯತ್ನಗಳು ಇದರಲ್ಲಿವೆ. ಕ್ರಿಶ್ಚಿಯನ್ ಮಿಷನರಿಗಳು ಶೋಷಿತರನ್ನು ಗುರಿಯಾಗಿಸಿಕೊಂಡು, ಆಮಿಷಗಳನ್ನೊಡ್ಡಿ ಮತಾಂತರಗೊಳಿಸುತ್ತಿದ್ದ ಬಗೆ; ಸಮಾನ ಅಂತಸ್ತಿನ ಭರವಸೆ ನೀಡಿದರೂ ಶೋಷಿತರನ್ನು ಶೋಷಿಸುತ್ತಲೇ ಇದ್ದ ಸಂಗತಿಗಳನ್ನು ವಿವರಿಸುತ್ತಾರೆ. ದಿಸ್ತೀನ್ ಗೌಡನ ಪಾತ್ರದ ಮೂಲಕ ಧಾರ್ಮಿಕ ವ್ಯವಸ್ಥೆಯ ಕೊರತೆಗಳನ್ನು ಎತ್ತಿ ತೋರಿಸುತ್ತಾರೆ. ಈ ಕಾದಂಬರಿ ೬೦ರ ದಶಕದ ಸಮಾಜ ವ್ಯವಸ್ಥೆಯ ಅಧ್ಯಯನ, ಧಾರ್ಮಿಕ ಶೋಷಣೆಗೆ ಹಿಡಿಯುವ ಕೈಗನ್ನಡಿ ಎಂದು ಹೇಳಬಹುದು. 

ಮತದಾನ ಹಾಗೂ ಇತರ ಕಾದಂಬರಿಗಳು: ಹಾಜರಿ ಕಡಿಮೆಯಾಗಲು ಕಾರಣೀಭೂತ – ವಿನಯ್ ರಾಯಚೂರ್ 

ಭೈರಪ್ಪನವರ ಕಾದಂಬರಿಗಳು ನನ್ನನ್ನು ಎಷ್ಟು ಆಕರ್ಷಿಸಿದ್ದವೆಂದರೆ, ನಾನು ಕ್ಲಾಸಿಗೆ ಹೋಗದೇ ಪಟ್ಟಾಗಿ ಕುಳಿತು ಮುಗಿಸುತ್ತಿದ್ದೆ. ನನ್ನ ಹಾಜರಿ ಕಡಿಮೆಯಾಗಲು ಇವೇ ಮೂಲ ಕಾರಣ. ಅವರ ಎಲ್ಲ ಕಾದಂಬರಿಗಳನ್ನು ಓದಿದ್ದೇನೆ. ‘ಮತದಾನ’ ಇಷ್ಟವಾಗುವುದಕ್ಕೆ ಮೂರೂ ಕಾರಣಗಳಿವೆ: ಚಿಕ್ಕದಾದರೂ ಚೊಕ್ಕದು ಈ ಕೃತಿ; ಆದರ್ಶಕ್ಕೆ ಜೋತು ಬಿದ್ದರೆ ಬದುಕು ಸಾಗದು; ರಾಜಕೀಯ ಎಂದಿಗೂ ಹೊಲಸೇ ಎನ್ನುವುದನ್ನು ಸಾಬೀತು ಮಾಡುತ್ತದೆ. ‘ಗೃಹಭಂಗ’ ದಲ್ಲಿ ಸಂಘರ್ಷದ ಬದುಕಿನ ಚಿತ್ರಣದ ಜೊತೆಗೆ, ಅಂತಹ ಅನುಭವಕ್ಕೆ ಒಳಗಾದವರಿಗೆ ಸಾಂತ್ವನ ಹೇಳುವ ಧ್ವನಿಯಿದೆ. ಭೈರಪ್ಪನವರ ಕಾದಂಬರಿಗಳಲ್ಲಿ ತತ್ವಶಾಸ್ತ್ರದ ಹೊಳವು ಸರ್ವೇ ಸಾಮಾನ್ಯ. ‘ಸಾಕ್ಷಿ’ ಹಾಗೂ ‘ನಾಯಿ ನೆರಳು’ ಇವೆರಡರಲ್ಲಿ ಆಧ್ಯಾತ್ಮಿಕತೆ, ತತ್ವಶಾಸ್ತ್ರಗಳ ಪ್ರಭಾವವನ್ನು ದಟ್ಟವಾಗಿ ಕಾಣಬಹುದು. ಪುನರ್ಜನ್ಮದ ಜಿಜ್ಞಾಸೆ ಕೂಡ ನಾಯಿನೆರಳಿನಲ್ಲಿ ತೀವ್ರವಾಗಿದೆ. ಅವರ ಯಾವುದೇ ಕಾದಂಬರಿಗಳಲ್ಲಿ ಅಂತಿಮ ನಿಷ್ಕರ್ಷ ಕಾಣ ಬರುವುದಿಲ್ಲ. ಓದುಗರ ಊಹೆಗೆ, ಚರ್ಚೆಗೆ ಅವು ತೆರೆದುಕೊಳ್ಳುತ್ತವೆ. ಅವರ ಕಾದಂಬರಿಗಳಿಂದ ಪ್ರೇರಿತನಾಗಿ, ನಾನು ತತ್ವಶಾಸ್ತ್ರ, ವೈಚಾರಿಕತೆ ಇವನ್ನೆಲ್ಲ ಇನ್ನು ಹೆಚ್ಚಾಗಿ ಅರಿಯುವ ಪ್ರಯತ್ನ ಮಾಡಿದ್ದೇನೆ. 

ಉತ್ತರಕಾಂಡ: ಭೈರಪ್ಪನವರ ಕೊನೆಯ ಕಾದಂಬರಿ – ಕೇಶವ ಕುಲಕರ್ಣಿ 

‘ಪರ್ವ’ದಲ್ಲಿ ಮಹಾಭಾರತವನ್ನು ಬರೆದ ಭೈರಪ್ಪನವರು, ‘ಉತ್ತರಕಾಂಡ’ದಲ್ಲಿ ರಾಮಾಯಣವನ್ನು ಬರೆದದ್ದು ೪೦ ವರ್ಷಗಳ ನಂತರ. ಭಾರತದ ಉದ್ದಗಲಕ್ಕೂ ಗದ್ಯ ಹಾಗೂ ಕಾವ್ಯದ ರೂಪದಲ್ಲಿ ನೂರಾರು ರಾಮಾಯಣಗಳ ಆವೃತ್ತಿಗಳನ್ನು ಕಾಣಬಹುದು. ಪಾಶ್ಚಾತ್ಯ ಶಿಕ್ಷಣದ ಪ್ರಭಾವ ಆಗುವವರೆಗೂ ರಾಮ ದೈವಾಂಶ ಸಂಭೂತನಾಗಿದ್ದ. ಆಧುನಿಕ ಕಾಲದಾರಂಭದಲ್ಲಿ ಪುರುಷೋತ್ತಮನಾದ. ವಿಚಾರವಾದ, ಹೊಸ ಸಿದ್ಧಾಂತಗಳ ಪ್ರಭಾವದಲ್ಲಿ ರಾಮಾಯಣವನ್ನು ವಿಭಿನ್ನ ದೃಷ್ಟಿಕೋನಗಳಿಂದ ನೋಡಲಾಗಿದೆ. ಪೌರಾಣಿಕ ನೋಟದಿಂದ ಹೊರತಾಗಿ, ಐತಿಹಾಸಿಕ ಅಥವಾ ಸಮಕಾಲೀನ ಕಥಾನಕದಂತೆ ಕಂಡವರಿದ್ದಾರೆ. ಕನ್ನಡದಲ್ಲೇ ಪೋಲಂಕಿ ರಾಮಮೂರ್ತಿಯವರು ‘ಸೀತಾಯಣ’ ಬರೆದು ಸಾಕಷ್ಟು ಚರ್ಚೆಗೊಳಗಾಗಿದ್ದರು. 

ಉತ್ತರಕಾಂಡದ ವೈಶಿಷ್ಟ್ಯತೆಯೆಂದರೆ, ಕಥೆ ಪ್ರಾರಂಭವಾಗುವುದೇ ಲವ-ಕುಶ ರ ಜನ್ಮವಾದನಂತರ. ರಾಮಾಯಣವು ಇಲ್ಲಿ ಸೀತೆಯ ಸ್ವಗತದಲ್ಲಿ rewind ಆಗುತ್ತದೆ. ‘ಪರ್ವ’ದಂತೆ ಇಲ್ಲಿನ ಪಾತ್ರಗಳೆಲ್ಲ ಮಾನವೀಕೃತಗೊಂಡಿವೆ. ಸೀತೆಯ ದೃಷ್ಟಿಕೋನದಿಂದ ಭೈರಪ್ಪ ರಾಮನನ್ನು ‘ಕಟ್ಟುತ್ತ’ ಹೋಗುತ್ತಾರೆ. ರಾಜನಾಗಿ ಗೆಲ್ಲುವ ರಾಮ, ಗಂಡನಾಗಿ ಸೋಲುತ್ತಾನೆ. ಅವರು ಈ ಕೃತಿಯಲ್ಲಿ ಸಾಕಷ್ಟು ಕಥೆಗಾರನ ಸ್ವಾತಂತ್ರ್ಯವನ್ನು ಬಳಸಿದ್ದಾರೆ. ಇದನ್ನು ಓದಿದಾಗ, ಭೈರಪ್ಪನವರು ಸಾಹಿತ್ಯ ಓದುಗರ ಕಟ್ಟುಪಾಡನ್ನು ಮೀರಿ ಒಳಗಾಗದೇ ಪಂಥ ಮೀರಿ ಬರೆದದ್ದನ್ನು ಗುರುತಿಸಬಹುದು. ಕೊನೆಯಲ್ಲಿ ವಾಲ್ಮೀಕಿ “ಈ ಕಥೆಗೆ ಸುಖಾಂತವನ್ನೊದಗಿಸಲೆಂದು ಅಯೋಧ್ಯೆಗೆ ಹೋಗಿ ಧರ್ಮಸಭೆ ಏರ್ಪಡಿಸಿದೆ. ಆದರೂ ಕಥೆಯ ದಿಕ್ಕನ್ನು ಬದಲಾಗಿಸಲಾಗಲಿಲ್ಲ” ಎಂದು ಸೋಲೊಪ್ಪಿಕೊಳ್ಳುತ್ತಾನೆ. 

ಈ ಕಾದಂಬರಿ, ಭೈರಪ್ಪನವರ ಒಳ್ಳೆಯ ಕಾದಂಬರಿ ಎಂದು ನನಗೆನ್ನಿಸುವುದಿಲ್ಲ; ಇದು ಅಷ್ಟಾಗಿ ಚರ್ಚೆಗೋ, ವಿಮರ್ಶೆಗೋ ಒಳಗೊಳ್ಳಲಿಲ್ಲ. 

ಮಂದ್ರ, ಹೆಸರೇ ಸೂಚಿಸುವಂತೆ ಸಂಗೀತದ ತಳಹದಿಯ ಮೇಲೆ ನಿಂತ ಕೃತಿ. ಮುಖ್ಯ ಪಾತ್ರದಾರಿ ಮೋಹನಲಾಲ, ಅಪ್ರತಿಮ ಪ್ರತಿಭೆಯ ಸಂಗೀತಗಾರ. ಹರಿದ್ವಾರ ಘಾಟಿಯಿಂದ ಮುಂಬಯಿಯ ಶಾಸ್ತ್ರೀಯ ಸಂಗೀತ ಲೋಕದ ಮಹಾನ್ ತಾರೆಯಾಗಿ ಬೆಳಗಿದವ. ಆತನ ಬೆಳವಣಿಗೆಯ ಮೂಲಕ ಭೈರಪ್ಪನವರು ಹಿಂದೂಸ್ತಾನಿ ಸಂಗೀತದ ಒಳ ನೋಟದ ಪರಿಚಯ ಮಾಡಿಕೊಡುತ್ತಾರೆ. ಇಲ್ಲಿ ಗುರು-ಶಿಷ್ಯ ಪರಂಪರೆಯ ಚಿತ್ರಣವಿದೆ; ಘರಾಣೆಗಳ ವಿವರವಿದೆ. ಹಲವು ರಾಗಗಳ ವಿವರ, ರಾಗಗಳ ರಸ, ಸಂಗೀತಗಾರ ಹೇಗೆ ಸ್ವರಗಳ ಹಂದರದಲ್ಲಿ ಸ್ವಯಂ ರಸಾಸ್ವಾಧನೆ ಮಾಡುತ್ತ, ಶ್ರೋತೃಗಳಿಗೂ ಉಣಬಡಿಸುತ್ತಾನೆ ಎಂದು ತೋರಿಸುತ್ತಾರೆ. ಜೊತೆಗೇ, ಕಲಾವಿದರ ನಡುವಿನ ಈರ್ಷ್ಯೆ, ಅನಾರೋಗ್ಯಕರ ಸ್ಪರ್ಧೆ ಇವನ್ನೆಲ್ಲ ಕಾಣಬಹುದು. 

ಮೋಹನಲಾಲನ ವಿಷಯ ಲಂಪಟತನ, ಅವಕಾಶವಾದಿ ಮನೋಭಾವ ಸಂಗೀತಕ್ಕಿಂತಲೂ ಮುಖ್ಯವಾದ ವಸ್ತುವಾಗಿ ಕಾಣಬಹುದು. ಆತ ಮಧು ಷಾ ಎಂಬ ಶಿಷ್ಯೆಯನ್ನು ತನ್ನ ಆಪ್ತ ಶಿಷ್ಯೆಯೆಂದು ಕರೆಯುತ್ತ, ಸಂಗೀತದ ಸಂಪೂರ್ಣ ಜ್ಞಾನವನ್ನು ಕೊಡುವ ನೆಪದಲ್ಲಿ ಶೋಷಿಸುವುದನ್ನು ಓದಿದಾಗ, ಇತ್ತೀಚಿಗೆ ಸುದ್ದಿಯಾದ ಸಂಗೀತ ಲೋಕದ ಲೈಂಗಿಕ ಶೋಷಣೆಯ ಕಥೆಗಳ ನೆನಪಾಗುವುದು ಸಹಜ. ಮೋಹನಲಾಲ ತನ್ನ ವೃತ್ತಿ ಜೀವನದ ಮಧ್ಯದಲ್ಲೇ ಮನೋಹರಿ ದಾಸ್ ಎಂಬ ನರ್ತಕಿಯ ಹಿಂದೆ ಓಡಿ  ಹೋಗುತ್ತಾನೆ. ಆಕೆ ತನ್ನ ವೃತ್ತಿಯಲ್ಲಿ ಮುಂದೆಬರಲು ಪಟ್ಟ ಕಷ್ಟಗಳು, ಶೋಷಣೆಗೆ ಒಳಗಾದ ಸಂಗತಿಗಳು; ತದನಂತರ ಆಕೆಯೇ ಸಹ ನರ್ತಕರನ್ನು ಶೋಷಿಸುವ ಪ್ರಸಂಗಗಳು ಕಥೆಯನ್ನು ನೈಜವಾಗಿಡಲು ಸಹಕರಿಸುತ್ತವೆ. 

ಈ ಕಾದಂಬರಿಯಲ್ಲೂ, ಭೈರಪ್ಪನವರ ಇತರ ಕಾದಂಬರಿಗಳಂತೇ ಹಿಂದಿರುವ ಸಂಶೋಧನೆಯ ಆಳ, ವಿಷಯದ ಮೇಲಿರುವ ಹಿಡಿತ, ಪಾತ್ರಗಳು ತಂದಿಡುವ ನೈತಿಕ ಸಂಧಿಗ್ತತೆ ಗಹನವಾಗಿವೆ. ಸಂಗೀತ ಪ್ರಿಯರೆಲ್ಲ ಓದಬೇಕಾದ ಕೃತಿಯೆಂದು ನನ್ನ ಅನಿಸಿಕೆ.  

ಭೈರಪ್ಪನವರೊಡನೆ ಸಹಚಾರ: ಡಾ.ಮತ್ತೂರು ನಂದಕುಮಾರ್ 

ಚಿತ್ರಕೃಪೆ : ಕೇಶವ ಕುಲಕರ್ಣಿ

ಇಂದು ಅನಿವಾಸಿಯ ಸದಸ್ಯರು ಸುಂದರವಾಗಿ ಭೈರಪ್ಪನವರ ಕಾದಂಬರಿಗಳ ಬಗ್ಗೆ ವಿಶ್ಲೇಷಣೆ, ಅನಿಸಿಕೆಗಳನ್ನು ಹಂಚಿಕೊಂಡರು. ಭೈರಪ್ಪನವರು ನನಗೆ ಆತ್ಮೀಯರು. ಅವರು ಮಿತಭಾಷಿ. ಎಂದೂ ಜನರ ಗಮನದ ಕೇಂದ್ರದಿಂದ ದೂರವುಳಿಯುತ್ತಿದ್ದರು. ಅವರ ಪ್ರಥಮ ಭೆಟ್ಟಿ, ನಾನು ಮೈಸೂರಿನಲ್ಲಿ ವ್ಯಾಸಂಗಕ್ಕೆ ಅಣ್ಣನ ಮನೆಯಲ್ಲಿದ್ದಾಗ. ಅಲ್ಲಿ ನಡೆದ ಕಾರ್ಯಕ್ರಮಕ್ಕೆ ದಿನವೂ ಬಂದು ಕುಳಿತು, ಕೇಳಿ ಸದ್ದಿಲ್ಲದೇ ಮರೆಯಾಗುತ್ತಿದ್ದರು. ಎಲ್ಲವನ್ನೂ ಗಮನವಿಟ್ಟು ಕೇಳುತ್ತಿದ್ದರು, ನೋಡುತ್ತಿದ್ದರು. ಸ್ಪಂಜಿನಂತೆ ವಿಚಾರಗಳನ್ನು ಹೀರಿಕೊಳ್ಳುತ್ತಿದ್ದರು. ಸಾಮಾನ್ಯರೊಡನೆ ಸಾಮಾನ್ಯರಾಗಿ ಬೆರೆಯುತ್ತಿದ್ದರು. ಪ್ರವಾಸಕ್ಕೆ ಹೋದಾಗ ಸ್ಥಳಿಯರೊಂದಿಗೇ ಉಳಿದು, ಅಲ್ಲಿನ ಆಚಾರ, ವಿಚಾರ, ವೈಶಿಷ್ಟ್ಯತೆಗಳನ್ನು ಅರಿಯುವ ಪ್ರಯತ್ನ ಮಾಡುತ್ತಿದ್ದರೇ ಹೊರತು, ಹೊಟೇಲುಗಳಲ್ಲಿ ತಂಗಿ ನೀರ ಮೇಲಿನ ಕಮಲದ ಎಲೆಯಂತಿರುತ್ತಿರಲಿಲ್ಲ. ಮತ್ತೂರಿಗೆ ಬಂದಾಗ, ನಮ್ಮ ಮನೆಯಲ್ಲೇ ಅವರ ವಾಸ್ತವ್ಯ. ದಿನವೂ ಬೆಳಗ್ಗೆ ನನ್ನೊಡನೆ ಊರಿನ ಕೆರೆಯ ಸುತ್ತ ವಾಕಿಂಗ್ ಹೋಗಲೇ ಬೇಕಿತ್ತು. ಆಗ ಎದುರಾಗುವ ಜನರೊಡನೆ ಕಳೆಯುತ್ತಿದ್ದರು; ವಯಸ್ಸಿನ ಭೇದವಿಲ್ಲದೇ ಚರ್ಚೆ ಮಾಡುತ್ತಿದ್ದರು. ಲಂಡನ್ನಿಗೆ ಬಂದಾಗ ಕೂಡ ನಮ್ಮ ಮನೆಯಲ್ಲೇ ತಂಗುತ್ತಿದ್ದರು. ಆಗ ಅವರು ನನ್ನೊಡನೆ ನೀರನ್ನು ಯಾಕೆ ಪೋಲು ಮಾಡಬಾರದು ಎಂಬ ವಿಷಯವನ್ನು ವರ್ಣಿಸಿದ ನೆನಪು ಮನದಲ್ಲಿ ತೇವವಾಗಿಯೇ ಇದೆ. ದಿನವೂ ವಾಕಿಂಗ್ ಹೋದಾಗ ಹಲವಾರು ವಿಷಯಗಳ ಚರ್ಚೆ ಆಗುತ್ತಿತ್ತು. ಅವರು ಮಂದ್ರ ಬರೆಯುವ ಮೊದಲು ಬೇಕಿದ್ದ ಸಾಮಗ್ರಿಯನ್ನು ಕಲೆ ಹಾಕಲು ನಾನು ಸ್ವಲ್ಪ ಸಹಾಯ ಮಾಡಿದ್ದನ್ನು ಅವರು ಮುನ್ನುಡಿಯಲ್ಲಿ ಉಲ್ಲೇಖಿಸಿದ್ದು  ನನಗೆ ಹೆಮ್ಮೆಯ ಸಂಗತಿ – ಹೂವಿನೊಡನೆ ನಾರೂ ದೇವರ ಮುಡಿಗೇರಿದಂತೆ. ಅವರು ನಂಗೆ ತುಂಬಾ ಆತ್ಮೀಯರು. ಆತ್ಮೀಯರ ಬಗ್ಗೆ ಮಾತನಾಡುವಾಗ ಕಾಲ ಕಳೆದ ಅರಿವೇ ಇರುವುದಿಲ್ಲ.  ಇವತ್ತಿನ ಭೈರಪ್ಪನವರ ಸ್ಮರಣೆ ಅರ್ಥಪೂರ್ಣವಾಗಿದೆ. ಅವರನ್ನು ಓದಬೇಕು, ಓದಿ ಅವರ ನೆನಪನ್ನು ಹಸಿರಾಗಿಡಬೇಕು. 

ಆಂಗ್ಲನಾಡಿನಲ್ಲಿ ಕರುನಾಡ ಸೊಗಡು: ದೀಪಾವಳಿ ಹಾಗೂ ಕರ್ನಾಟಕ ರಾಜ್ಯೋತ್ಸವದ ಸಂಭ್ರಮ – ನಾಗರಾಜ ಬಸವರಾಜು

 ದೀಪಗಳ ಹಬ್ಬ ದೀಪಾವಳಿ ಮತ್ತು ನಮ್ಮೆಲ್ಲರ ಹೆಮ್ಮೆಯ ನಾಡಹಬ್ಬ ಕರ್ನಾಟಕ ರಾಜ್ಯೋತ್ಸವ — ಈ ಎರಡೂ ಹಬ್ಬಗಳು ಅನಿವಾಸಿ ಕನ್ನಡಿಗರಿಂದ ನವೆಂಬರ್ ೦೮, ೨೦೨೫ರಂದು ಮಿಲ್ಟನ್ ಕೀನ್ಸ್‌ನಲ್ಲಿ ಅದ್ಧೂರಿಯಾಗಿ ಆಚರಿಸಲ್ಪಟ್ಟವು. ದೂರದ ಬ್ರಿಟನ್ ನೆಲದಲ್ಲಿ, ಅನಿಕೇತನ ಮಿಲ್ಟನ್ ಕೀನ್ಸ್ (ಸ್ಥಳೀಯ ಸಮುದಾಯ ಸಂಸ್ಥೆ) ಮತ್ತು ೪೦ ವರ್ಷಗಳ ಸುದೀರ್ಘ ಇತಿಹಾಸವಿರುವ ಪ್ರತಿಷ್ಠಿತ ಕನ್ನಡ ಬಳಗ ಯು.ಕೆಯ ಸಹಭಾಗಿತ್ವದಲ್ಲಿ ನಡೆದ ಈ ಕಾರ್ಯಕ್ರಮವು ಕನ್ನಡಿಗರ, ಕರುನಾಡ ಕುಡಿಗಳ ಹೃದಯಗಳನ್ನು ಬೆಸೆದ ಬೃಹತ್ ಸಾಂಸ್ಕೃತಿಕ ಸೇತುವೆಯಾಗಿತ್ತು.

 ಆದಿಪೂಜಿತ ವಿನಾಯಕನ ಆರಾಧನೆಯೊಂದಿಗೆ, ಉಪಸ್ಥಿತರಿದ್ದ ಗೌರವಾನ್ವಿತ ಅತಿಥಿಗಳಾದ ಡಾ. ಎಂ. ಎನ್. ನಂದಕುಮಾರ್ ಹಾಗೂ ಗಾಯಕ ಶ್ರೀ ಸಂತೋಷ್ ವೆಂಕಿಯವರು ಎರಡೂ ಸಂಘ ಸಂಸ್ಥೆಗಳ ಅಧ್ಯಕ್ಷರು, ನಿರ್ದೇಶಕರ ಉಪಸ್ಥಿತಿಯಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. 

ನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ವಿದೇಶ ನೆಲದಲ್ಲಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ರೀತಿಯ ಆಚರಣೆಗಳು ಮೈಲಿಗಲ್ಲು. ಯುವ ಪೀಳಿಗೆಗೆ ನಮ್ಮ ನಾಡು-ನುಡಿಯ ಮಹತ್ವವನ್ನು ಸಾರುವ ಉದ್ದೇಶದಿಂದ ಆಯೋಜಿಸಲಾದ ಈ ಉತ್ಸವಕ್ಕೆ ಅಪಾರ ಸಂಖ್ಯೆಯ ಸ್ಥಳೀಯ ಕನ್ನಡಿಗರು ಹಾಗು ದೂರದೂರಿನ ಕನ್ನಡ ಬಳಗದ ಸದಸ್ಯರು ಕುಟುಂಬ ಸಮೇತ ಆಗಮಿಸಿ ಕರುನಾಡ ಸೊಗಡನ್ನು ಮೆರೆಸಿದರು. ಕಾರ್ಯಕ್ರಮದ ಗೌರವ ಅತಿಥಿ, ಡಾ. ಎಂ. ಎನ್. ನಂದಕುಮಾರ್ (ಕಾರ್ಯನಿರ್ವಾಹಕ ನಿರ್ದೇಶಕರು, ಭಾರತೀಯ ವಿಧ್ಯಾ ಭವನ, ಲಂಡನ್) ನೆರೆದವರನ್ನು ಉದ್ದೇಶಿಸುತ್ತ, ಈ ರೀತಿಯ ಕಾರ್ಯಕ್ರಮಗಳು ಮತ್ತು ಕನ್ನಡ/ಕರ್ನಾಟಕ ಕುರಿತಾದ ಕಾರ್ಯಕ್ರಮಗಳು ನಾಡಿನಿಂದ ದೂರದ ದೇಶದದಲ್ಲಿ ಬೆಳೆಯುತ್ತಿರುವ ಮಕ್ಕಳಿಗೆ ಸೇತುವೆಯಾಗಿ, ಕರ್ನಾಟಕ ಭಾಷೆಗಳ, ಕಲಾ ಸಂಸ್ಕೃತಿ ಪರಂಪರೆಗಳ ಪರಿಚಯವಾಗಿ, ಈ ಅಭಿರುಚಿಗಳ ಬೆಳವಣಿಗೆಗೆ ಪೂರಕವಾಗಿರಲಿ ಎಂದು ಆಶಿಸಿದರು.

 ಕಾರ್ಯಕ್ರಮದ ಪ್ರಮುಖ ಆಕರ್ಷಣೆ ಹಲವಾರು ಕಲಾವಿದರ ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನಗಳು. ಮಕ್ಕಳು, ಯುವಕರು ಮತ್ತು ಹಿರಿಯರು ಜಾನಪದ, ಶಾಸ್ತ್ರೀಯ ಸಂಗೀತ, ನೃತ್ಯ ಮತ್ತು ನಾಟಕಗಳ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಮಕ್ಕಳ ಛದ್ಮವೇಶ, ಜನಪದ ಹಾಗು ಸಿನಿಮಾ ನೃತ್ಯಗಳು, ವಯಸ್ಕರ ಗಾಯನ, ದಂಪತಿಗಳ ಜೋಡಿ ನೃತ್ಯ, ನವರಸ ರೂಪಕ, ರಾಮಾಯಣ ಸಂಗೀತ ನೃತ್ಯ ಹಾಗು ಕರುನಾಡ ವೈಭವ ಕುರಿತಾದ ಫಿನಾಲೆ ನೃತ್ಯ ಸಭಿಕರ ಮನ ಸೂರೆಗೊಂಡವು. ಪ್ರತಿಯೊಂದು ಪ್ರದರ್ಶನವೂ ಕನ್ನಡಿಗರ ಕಲಾಭಿರುಚಿ ಮತ್ತು ನಾಡಿನ ಸಂಸ್ಕೃತಿಯ ಶ್ರೀಮಂತಿಕೆಗೆ ಸಾಕ್ಷಿಯಾದವು. ದೀಪಾವಳಿಯ ಬೆಳಕು ಮತ್ತು ರಾಜ್ಯೋತ್ಸವದ ಕೆಂಪು-ಹಳದಿ ವರ್ಣಗಳು, ಎಲ್ಲರ ಸಾಂಪ್ರಾದಾಯಿಕ ಉಡುಗೆ ತೊಡುಗೆಗಳು ಹಾಗೂ ಅದಕ್ಕನುಗುಣವಾಗಿ ಒಳಾಂಗಣ ಅಲಂಕಾರಗಳು ಸಮಾರಂಭದ ಸಂಭ್ರಮವನ್ನು ಇಮ್ಮಡಿಗೊಳಿಸಿದ್ದವು.

ಸ್ಮರಣಾಂಜಲಿ: ಕನ್ನಡದ ದಿಗ್ಗಜರಿಗೆ ನಮನ

ಈ ವರ್ಷ ನಮ್ಮಿಂದ ದೂರವಾದ, ಈ ಹಿಂದೆ ಕನ್ನಡ ಬಳಗ ಯು ಕೆ ಗೆ ಆಹ್ವಾನಿತ ಅತಿಥಿಯಾಗಿ ಬಂದಿದ್ದ ನಾಡೋಜ ಡಾ. ಎಸ್. ಎಲ್. ಭೈರಪ್ಪ ಮತ್ತು ಕವಿ ಡಾ. ಎಚ್. ಎಸ್. ವೆಂಕಟೇಶಮೂರ್ತಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಅಲ್ಲದೆ, ಕನ್ನಡ ಬಳಗ ಯು.ಕೆಯ ಬೆಳವಣಿಗೆಗೆ ಶ್ರಮಿಸಿ, ಇತ್ತೀಚೆಗೆ ಅಗಲಿದ ಹಿರಿಯ ಸದಸ್ಯರ ಆತ್ಮಗಳಿಗೆ ಒಂದು ನಿಮಿಷದ ಮೌನ ಮತ್ತು ನುಡಿನಮನದ ಮೂಲಕ ಗೌರವ ಸಲ್ಲಿಸಲಾಯಿತು. ತಮ್ಮ ನೆಚ್ಚಿನ ಹಿರಿಯರನ್ನು ನೆನೆದು ಅನೇಕರು ಭಾವುಕರಾದರು.

ಬಹುಭಾಷಾ ಗಾಯಕ ಶ್ರೀಯುತ ಸಂತೋಷ್ ವೆಂಕಿ ಅವರ ಸಂಗೀತ ರಸಸಂಜೆ ಮೂಲಕ ನೆರೆದಿದ್ದ ಚಿಣ್ಣರು, ಯುವಕರು ಹಾಗೂ ಹಿರಿಯರೆಲ್ಲ ಕುಣಿದು ಕುಪ್ಪಳಿಸುವಂತೆ ಮಾಡಿದರು. ಈ ಕಾರ್ಯಕ್ರಮ ಕೇವಲ ಹಬ್ಬದ ಆಚರಣೆಯಾಗಿರದೆ, ಹೊರನಾಡ ಕನ್ನಡಿಗರು ತಮ್ಮ ಬೇರುಗಳನ್ನು ಗಟ್ಟಿಗೊಳಿಸಿಕೊಂಡು, ಹೊಸ ಪೀಳಿಗೆಗೆ ಕರುನಾಡ ವೈಭವಯುತ ಸಂಸ್ಕೃತಿಯ, ಪರಂಪರೆಯ ಮಹತ್ವವನ್ನು ತಿಳಿಸುವ ಶ್ಲಾಘನೀಯ ಪ್ರಯತ್ನವಾಯಿತು.

‘ಭೈರಪ್ಪನವರಿಗೆ ಶ್ರದ್ಧಾಂಜಲಿ’ ಕಾರ್ಯಕ್ರಮಕ್ಕೆ ನೆರೆದ ಸಭಿಕರು – ಚಿತ್ರಕೃಪೆ ಆನಂದ ಕೇಶವಮೂರ್ತಿ

ಭೈರಪ್ಪ ನಮನ


ಅನಿವಾಸಿ ಬಂಧುಗಳಿಗೆಲ್ಲ ನಮಸ್ಕಾರ. ಜೊತೆಗೇ ನಾಡಹಬ್ಬ ದಸರೆಯ ಹಾರ್ದಿಕ ಶುಭಾಶಯಗಳು. ನವರಾತ್ರಿಯ ಈ ಶುಭ ಸಂದರ್ಭದಲ್ಲಿ ನವದುರ್ಗೆಯರು ತಮ್ಮೆಲ್ಲರಿಗೂ ಸನ್ಮಂಗಳವನ್ನುಂಟು ಮಾಡಲಿ.
ಈ ನಾಡ ಹಬ್ಬದ ಸರಸ್ವತಿ ಪೂಜೆಯ ಸಂದರ್ಭದಲ್ಲಿ ಸರಸ್ವತಿ ಸಮ್ಮಾನರಾದ ಸರಸ್ವತಿ ಪುತ್ರನನ್ನು ನಾಡು ಕಳೆದುಕೊಂಡ ವಿಷಾದವಿದೆಯಾದರೂ ಅಕ್ಷರಗಳಿಗೆಂದಿಗೂ ಸಾವಿಲ್ಲ, ಅಕ್ಷಯ ಆಯಸ್ಸು ಅವುಗಳಿಗೆ. ನಾಡಿನ ಹೆಮ್ಮೆಯ ಹೆಸರಾಂತ ಸಾಹಿತಿ ಭೈರಪ್ಪನವರು ಆ ಅಕ್ಷರ ರೂಪದಲ್ಲಿ ಕೀರ್ತಿ ಶರೀರದಲ್ಲಿ ಚಿರಕಾಲ ನಮ್ಮೊಡನೆ ಇರುತ್ತಾರೆ ಎಂಬುದು ಸಮಾಧಾನದ ವಿಷಯ.
ಒಂದು ರೀತಿಯಲ್ಲಿ ನನ್ನನ್ನು ಈ ಅನಿವಾಸಿ ಗುಂಪಿಗೆ ಸೇರಿಸಿದ ಶ್ರೇಯವೂ ಪರೋಕ್ಷವಾಗಿ ಭೈರಪ್ಪನವರಿಗೇ ಸೇರಬೇಕು ಎನ್ನಿ. 2019ರ ನಾಡಹಬ್ಬದ ಉದ್ಘಾಟನೆ ಮುಗಿಸಿದ ಭೈರಪ್ಪನವರು ಶತಾವಧಾನಿ ಗಣೇಶರೊಂದಿಗೆ ನೇರ ಲಂಡನ್ ಗೆ ಬಂದಿಳಿದಿದ್ದರು.ಆ ಕಾರ್ಯಕ್ರಮದಲ್ಲಿ ನಾನು ಮೊದಲ ಬಾರಿಗೆ ಅನಿವಾಸಿಯ ಘಟಾನುಘಟಿಗಳಾದ ಪ್ರೇಮಲತಾ ರಾಮ್ ಹಾಗೂ ಕೇಶವ್ ಅವರ ಸಂಪರ್ಕಕ್ಕೆ ಬಂದಿದ್ದು. ಈ ಅನಿವಾಸಿಯನ್ನು ನನ್ನದಾಗಿಸಿಕೊಂಡಿದ್ದು.
ಅವತ್ತಿನ ಆ ಕಾರ್ಯಕ್ರಮ ನನ್ನ ಜೀವಮಾನವಿಡೀ ನೆನಪಿಡುವಂತಹ ಅವಿಸ್ಮರಣೀಯ ಕಾರ್ಯಕ್ರಮ. ಶ್ರೀಯುತ ಎಸ್ ಎಲ್ ಭೈರಪ್ಪ ಮತ್ತು ಶತಾವಧಾನಿ ಗಣೇಶರಂಥ ನಡೆದಾಡುವ ವಿಶ್ವಕೋಶಗಳನ್ನು ಸ್ಟೇಜ್ ಮೇಲೆ ಏಕಕಾಲಕ್ಕೆ ನೋಡುವ ಅವರ ಮಾತು ಕೇಳುವ ಅವರ ಕೃತಿಗಳ ಬಗ್ಗೆ ತೊದಲ ನುಡಿ ಆಡುವ ಅವಕಾಶ ಸಿಕ್ಕಿತ್ತಂದು ಸಾಹಿತ್ಯದ ರಸಗಳ ಗುಣಪಡಿಸಿ ನಮ್ಮ ಆತ್ಮವನ್ನು ತೃಪ್ತಪಡಿಸುವ ಅವರಿಗೆ ಅಂದು ನಮ್ಮ ಮನೆಯಲ್ಲಿ ನಮ್ಮ ಕೈಯಾರೆ ಗುಣಪಡಿಸುವ ಭಾಗ್ಯವು ಸಿಕ್ಕಿತ್ತು ಅದೇ ನೆನೆಸಿಕೊಂಡರೆ ಈಗಲೂ ಹೃದಯ ಖುಷಿಯಿಂದ ಧನ್ಯತೆಯಿಂದ ಮೂಕವಾಗುತ್ತದೆ.
ಇಂದಿನ ಸಂಚಿಕೆಯಲ್ಲಿ ಅಂದಿನ ನನ್ನ ಮಾತುಗಳನ್ನೇ ಹಂಚಿಕೊಳ್ಳುತ್ತಿದ್ದೇನೆ.
ಅವರಿನ್ನಿಲ್ಲ ಎಂದರಿವಾದಾಗ ಮನಭಾರವಾಗುತ್ತದೆ.ಮಾತು ಮೂಕವಾಗುತ್ತದೆ. ಹೃದಯ ಒದ್ದೆಯಾಗುತ್ತದೆ. ಆದರೆ ಭೈರಪ್ಪನವರು ಹಚ್ಚಿದ ಅಕ್ಷರ ಜ್ಯೋತಿ ‘ ಮಾತು ಮನಂಗಳಿಂದ ಅತ್ತತ್ತ ಮೀರಿ, ನಿರುಪಾಧಿಕ ನಿರ್ಮಲವಾಗಿ ಬೆಳಗುತ್ತಲೇ ಇರುತ್ತದೆ.. ಬೆಳಕ ಹಬ್ಬಿಸುತ್ತಲೇ ಇರುತ್ತದೆ.

~ ಸಂಪಾದಕಿ

ಭೈರಪ್ಪನೆಂಬ ದೈತ್ಯ ಪ್ರತಿಭೆ

ಭೈರಪ್ಪನವರು ಒಂದು ಅಗಾಧಸಾಗರ. ಅದರ ಆಳ, ವಿಸ್ತಾರ, ಭೋರ್ಗರೆತ, ಅಲೆಗಳ ಕುಣಿತ ಅಂತರಾಳದಲ್ಲ ಡಗಿರುವ ಹವಳ ಮುತ್ತುಗಳು, ನೂರೆಂಟು ಬಗೆಯ ಸಸ್ಯರಾಜಿಗಳು, ಸಣ್ಣ ಮೀನಿನಿಂದ ಹಿಡಿದು ದೊಡ್ಡ ತಿಮಿಂಗಿಲಿನವರೆಗೆ ಸಾವಿರಾರು ಬಗೆಯ ಜೀವ ವೈವಿಧ್ಯಗಳು, ಅಷ್ಟೇ ಏಕೆ ಅಸ್ತಮಿಸುವ ಸೂರ್ಯ,  ಉದಯಿಸುತ್ತಿರುವ ಚಂದ್ರ ಇವರನ್ನೂ ತನ್ನಲ್ಲಿ ಒಳಗೊಂಡಿರುವಂಥದ್ದು. ಇನ್ನು ನಾನೋ ಸಮುದ್ರದ ದಡದಲ್ಲಿ ಕುಳಿತು ಅಟ್ಟಿ ಬರುವ ಅಲೆಗಳಿಂದ ಪಾದ ತೋಯಿಸಿಕೊಂಡು, ಉಸುಕಿನ ಪುಟ್ಟ ಗುಬ್ಬಿ ಮನೆ ಕಟ್ಟಿ, ದಡಕ್ಕೆ ಬಂದು ಬಿದ್ದ ಒಂದೆರಡು ಶಂಖ ಕಪ್ಪೆ ಚಿಪ್ಪುಗಳನ್ನು ಆರಿಸಿ “ಓಹೋ ಸಾಗರ ತಾನೇ?  ನಾ ಬಲ್ಲೆ” ಎಂದು ಹೇಳುವಂತಹ ದುಸ್ಸಾಹಸ.. ನಾನು ಇಲ್ಲಿ ಬಂದು ಇಂದು ಸಾಕ್ಷಾತ್ ಅವರ ಉಪಸ್ಥಿತಿಯಲ್ಲಿ ಅವರ ಕೃತಿಗಳ ಬಗ್ಗೆ ಮಾತನಾಡುವುದು ಎಂದರೆ. ಸಂಪೂರ್ಣ ವೇದ ವಾಗ್ಮಯದ ಕರ್ತೃವೇ ಆದ ಪರಮಾತ್ಮನೆದಿರು ಒಂದೆರಡು ಶಬ್ದಗಳಿಂದ ಹೆಣೆದ ಸ್ತೋತ್ರ ಒಂದನ್ನು ‘ನಾ ರಚಿಸಿದೆ’ ಎಂದು ಬೀಗುತ್ತಾ ಹಾಡುವ ಭಕ್ತನ ಪಾಡು ನನ್ನದು. ಅವರೊಂದು ಅಗಾಧ ಚೈತನ್ಯ. ಅದಕ್ಕೇ ನಾ ಮುಂಚೆಯೇ ಹೇಳುತ್ತಿರುವೆ. ಈಗ ನಾ ಮಾತಾಡುತ್ತಿರುವುದು ಭೈರಪ್ಪನವರ ಬಗ್ಗೆ ಅಲ್ಲ “ಭೈರಪ್ಪ ನನಗೆ ದಕ್ಕಿದಷ್ಟು” ಎಂಬುದರ ಬಗ್ಗೆ ‘ಬಾಲಕನ ಕಲಭಾಷೆ ಕೇಳಿ ಜನನಿ ಸುಖ ಪಡುವಂದದಿ’ ಎಂದು ದಾಸರು ಹಾಡುವಂತೆ ಅವರೂ ಕೂಡ ನನ್ನೀ ತೊದಲುಗಳನ್ನು ಸಾವಧಾನದಿಂದ ಕೇಳಿಯಾರು ಎಂಬ ವಿಶ್ವಾಸ ನನಗೆ. 

ಭೈರಪ್ಪನವರು ಶತಾವಧಾನಿ ಗಣೇಶರೊಂದಿಗೆ

ಭೈರಪ್ಪನವರ ಕೃತಿಗಳ ಬಗ್ಗೆ ಹೇಳ ಹೊರಟಾಗ ಮೊದಲನೆಯದಾಗಿ ತಾವೇ ತಾವಾಗಿ ಓದಿಸಿಕೊಂಡು ಹೋಗುವ ಅವುಗಳ ಗುಣದ ಬಗ್ಗೆ ಬಹಳ ಅಚ್ಚರಿಯಾಗುತ್ತದೆ. ಕಾದಂಬರಿಯ ವಿಷಯ ವಸ್ತು- ಸಿದ್ಧಾಂತಗಳು ಏನೇ ಇರಲಿ, ಅವುಗಳನ್ನು ನೀವು ಒಪ್ಪಲಿ ಬಿಡಲಿ ಅದು ಬೇರೆ ವಿಷಯ. ಆದರೆ ಪುಸ್ತಕ ಹಿಡಿದರೆ ಸಾಕು ಮುಗಿಸುವ ತನಕ ಒಂದರೆಗಳಿಗೆ ಬಿಡದಂತೆ ನಮ್ಮನ್ನು ಅವಿಶ್ರಾಂತವಾಗಿಸಿ ಒಂದೇ ಗುಕ್ಕಿಗೆ ಓದಿಸಿಕೊಳ್ಳುವಂಥ ಅದ್ಭುತ ಶಕ್ತಿ ಅವುಗಳಿಗೆ. ನಾನಂತೂ ಇದುವರೆಗೂ ಅವರ ಕಾದಂಬರಿಗಳನ್ನು ಓದುತ್ತಾ ಒಲೆಯ ಮೇಲಿಟ್ಟ ಅದೆಷ್ಟು ಪಾತ್ರೆಗಳನ್ನು ಸುಟ್ಟು ಕರಕಲು ಮಾಡಿ ಎಸೆದೇಬಿಟ್ಟಿದ್ದೇನೋ ಲೆಕ್ಕವಿಲ್ಲ. ಅಂದರೆ ನಾನಿಲ್ಲಿ ಹೇಳಬಯಸುತ್ತಿರುವುದು ಇಷ್ಟೇ , ಓದಿಗೆ ಬೇಕಾದದ್ದು ಕಣ್ಣು, ತಲೆ, ಮನಸ್ಸುಗಳು.ಅವು ಮೂರು ತಲ್ಲೀನವಾಗಿದ್ದರೆ ಸಾಕಲ್ಲವೇ? ಆದರೆ ಇವರ ಕಾದಂಬರಿಗಳನ್ನು ಓದುತ್ತಿರುವಾಗ ಎಲ್ಲ ಜ್ಞಾನೇಂದ್ರಿಯಗಳೂ ಓದಿನ ಮೋಡಿಗೆ ಸಿಲುಕಿ ಬಿಡುತ್ತವೆ. ಮನೆಯಲ್ಲಿ ಯಾರೋ ಕೂಗಿದ್ದು, ಬೆಲ್ ಆಗಿದ್ದು,ಮಗು ಅತ್ತದ್ದು ಕಿವಿಗೆ ಕೇಳದು. ಸುಟ್ಟ ವಾಸನೆ ಮೂಗಿಗೆ ಅಡರದು. ಒಂಥರಾ ಧ್ಯಾನಸ್ಥ ಸ್ಥಿತಿ. ಧ್ಯಾನದಲ್ಲಿ ಹೊರ ಜಗತ್ತಿನ ಆಗುಹೋಗುಗಳ ಅರಿವಾಗುತ್ತಿದ್ದರೂ ಅಲ್ಲಿ ನಮ್ಮದು ಕೇವಲ ಸಾಕ್ಷಿ ಭಾವ. ಯಾವ ಕ್ರಿಯೆ-  ಪ್ರತಿಕ್ರಿಯೆಗಳೂ ಇಲ್ಲದಂತಹ ಸ್ಥಿತಿಯಲ್ಲಿರುತ್ತದೆ. ಅಂಥದೇ ಒಂದು ಸ್ಥಿತಿಯನ್ನು ಅವರ ಕಾದಂಬರಿಗಳು ಒದಗಿಸಲು ಸಶಕ್ತವಾದವುಗಳು. ಎರಡನೆಯದು ಅವರು ಬಳಸುವ ಭಾಷೆ. ಟಿಪಿಕಲ್ ಆದ ‘ಭೈರಪ್ಪ ಭಾಷೆ’ ಅಂತಲೇ ಅದನ್ನು ನಾವು ಕರೆಯಬಹುದು. ಅವರ ಕಾದಂಬರಿಗಳನ್ನು ಓದುವಾಗ ಮನೆ ಕೆಲಸ ಇತ್ಯಾದಿಗಳನ್ನು ಮಾಡುತ್ತಿರುವಾಗಲೂ ಅದೇ ಭಾಷೆ ನನ್ನ ತಲೆಯಲ್ಲಿ ಓಡುತ್ತಿರುತ್ತದೆ. ಉದಾಹರಣೆಗೆ.. ಅವಸರದಲ್ಲಿ ಹಾಲನ್ನು ಜೋರು ಉರಿಯಲ್ಲಿಟ್ಟು ಉಕ್ಕಿಸಿದರೆ “ಹಾಲನ್ನು ಅವಸರಿಸದೇ ಸಣ್ಣ ಉರಿಯಲ್ಲಿಟ್ಟು ಕಾಸಿದ್ದರೆ ಹದವಾದ ಕೆನೆಯೂ ದಕ್ಕುತ್ತಿತ್ತು.. ಗ್ಯಾಸನ್ನು ಸ್ವಚ್ಛಗೊಳಿಸುವ ಪ್ರಮೇಯವೂ ತಪ್ಪುತ್ತಿತ್ತು”ಎನ್ನುವ ವಿಚಾರ ಹೊಳೆಯಿತು, ಭಾವಸ್ಪರಿಸಿತು” ಇತ್ಯಾದಿಯಾಗಿ.ಈ ತೆರನಾಗಿ ನನಗೆ ಅರಿವಿಲ್ಲದೇ ಆ ಭಾಷಾ ಪ್ರಯೋಗ ನನ್ನಲ್ಲಿ ನಡೆದಿರುತ್ತದೆ. ಹೀಗೆ ವೈಚಾರಿಕ ನೆಲೆಯಿರಲಿ, ಭಾಷಾ ಪ್ರಯೋಗವಿರಲಿ, ಕಥಾಹಂದರವಿರಲಿ, ಪಾತ್ರ ಪ್ರಪಂಚವಿರಲಿ ಅವರ ಸಮ್ಮೋಹನಕ್ಕೆ ಒಳಗಾಗಿ ಬಿಟ್ಟಿರುತ್ತೇವೆ. ‘ಬೌದ್ಧಿಕ ಸಾಹಚರ್ಯ’ ಎನ್ನುವ ಪದವನ್ನು ನಾನು ಕಾಲೇಜಿನಲ್ಲಿದ್ದಾಗ ಮೊದಲ ಸಲ ಅವರ ಕಾದಂಬರಿಯಲ್ಲೋದಿ ರೋಮಾಂಚಿತಳಾಗಿದ್ದು ಈಗಲೂ ನೆನಪಿದೆ. ಹೀಗೆ ಸಂಪೂರ್ಣ ಭಿನ್ನವಾದ ಆಯಾಮಗಳನ್ನು ಒದಗಿಸುವುದೇ ಅವರ ಕಾದಂಬರಿಗಳ ವೈಶಿಷ್ಟ್ಯ. ಇನ್ನು  ಅವರು ಸೃಷ್ಟಿಸಿದ ಪಾತ್ರ ಪ್ರಪಂಚ.. ಗೃಹ ಭಂಗದ ಪಾತ್ರ ವೈವಿಧ್ಯಗಳಂತೂ ಅನುಪಮ. ಸೌಮ್ಯತೆಯ ಸಂಕೇತವಾದ ನಂಜಮ್ಮ, ಬಾಯ್ ತೆರೆದರೆ ಸಾಕು ಬೈಗುಳಗಳನ್ನು ಉದುರಿಸುವ ಗಂಗಮ್ಮ, ಬೇಜವಾಬ್ದಾರಿಯ ಚೆನ್ನಿಗರಾಯ, ಉಡಾಫೆಯ ಅಪ್ಪಣ್ಣ, ಎಲ್ಲರಿಗೂ ಒಳ್ಳೆಯದನ್ನೇ ಬಯಸುವ ಅಯ್ಯನವರು.. ಹೀಗೆ ಮಾನವ ಪ್ರಪಂಚದ ಎಲ್ಲ ಮುಖಗಳು, ಎಲ್ಲ ಭಾವ ರಸಗಳು ಇಡಿ ಇಡಿಯಾಗಿ ದೊರಕುವಂತಹ ಅಪರೂಪದ ಕಾದಂಬರಿ. ಅವರು ಸೃಷ್ಟಿಸಿದ ಸ್ತ್ರೀ ಪಾತ್ರಗಳೂ ಅಷ್ಟೇ.. ಸಮಕಾಲೀನ ಸಾಮಾಜಿಕ ವ್ಯವಸ್ಥೆ ಮೌಲ್ಯಗಳ ವಿರುದ್ಧ ಸಿಡಿದೆದ್ದ ‘ದಾಟು’ವಿನ ಸತ್ಯ ಇರಲಿ, ‘ಸಾರ್ಥ’ದ ಚಂದ್ರಿಕೆ ಇರಲಿ , ಉತ್ತರ ಕಾಂಡದ ಸೀತೆ ಇರಲಿ ಅಥವಾ ಆವರಣದ ರಜಿಯಾ ಆಗಿರಲಿ ಇವರೆಲ್ಲ ವಿಭಿನ್ನವಾಗಿ ಚಿಂತಿಸಿ, ವಿಭಿನ್ನವಾಗಿ ಬಾಳಿ, ಕೊನೆಯಲ್ಲಿ ಸೋತಂತೆ ಕಂಡರೂ ಸೋಲಲ್ಲೂ ಗೆಲುವನ್ನು ಕಂಡಂತಹವರು. ಸ್ವಲ್ಪ ಕಣ್ತೆರೆದರೆ ಸಾಕು ನಮ್ಮಲ್ಲೇ ನಮ್ಮ ಸುತ್ತಮುತ್ತಲಲ್ಲೇ ಅಂಥ ಹತ್ತು ಹಲವಾರು ಪಾತ್ರಗಳ ಅನಾವರಣವಾಗುತ್ತದೆ. ನಾನು ಮನೆಯಲ್ಲಿ ಎಷ್ಟೋ ಸಲ ಯಾವುದೋ ಕೆಲಸದ ಬಗ್ಗೆ ಬೇಜವಾಬ್ದಾರಿ ತೋರುವ ನಮ್ಮ ಯಜಮಾನರಿಗೆ ‘ಚೆನ್ನಿಗರಾಯನಂಗ ಮಾಡಬ್ಯಾಡ’ ಅಂತಲೂ,  ಮಕ್ಕಳ ಬಗ್ಗೆ ಗಮನಕೊಡದಿದ್ದಾಗ ‘ನೀ ಏನು ನಿರಾಕರಣದ ನರಹರಿನಾ?’ ಅಂತಲೂ  ಮೂದಲಿಸುವಷ್ಟು ಜೀವಂತ ಆ ಪಾತ್ರಗಳು. ಯಾವುದೇ ವಿಷಯದ ಬಗ್ಗೆ ಕಾದಂಬರಿ ಬರೆಯಲಿ ಬರೆಯುವುದಕ್ಕಿಂತ ಮುಂಚಿನ ಅವರ ಅಧ್ಯಯನದ ಶಿಸ್ತು, ಅಚ್ಚುಕಟ್ಟು ತನಗಳು, ಆ ವಿಷಯದ ಬಗೆಗಿನ ನಿಷ್ಠೆ ಅವುಗಳ ರೀತಿಯೇ ಬೇರೆ. ಭೀಮ ಕಾಯದ ಕುಸ್ತಿ ಇರಲಿ, ಮಂದ್ರದ ಸಂಗೀತ ನಾಟ್ಯಗಳಿರಲಿ, ಸಾರ್ಥದ ಇತಿಹಾಸ -ಪುರಾಣ -ಮೂರ್ತಿ ಶಿಲ್ಪ- ವೇದಾಂತ- ನಾಟಕಗಳಿರಲಿ, ಯಾನದ ಸ್ಪೇಸ್ ಟೆಕ್ನಾಲಜಿ ಇರಲಿ ಎಲ್ಲವೂ ಪೂರ್ಣ.. ಪರಿಪೂರ್ಣ. ಹೀಗಾಗಿ ಅವರ ಕಾದಂಬರಿಗಳನ್ನು ಓದುವಲ್ಲಿ ಓದುಗರಾದ ನಾವೂ ಸ್ವಲ್ಪ ಮಟ್ಟಿಗಿನ ಸಿದ್ಧತೆ ಮಾಡಿಕೊಳ್ಳುವುದು ಅನಿವಾರ್ಯವೇನೋ ? ಉದಾಹರಣೆಗೆ ಮಂದ್ರವನ್ನೇ ತೆಗೆದುಕೊಳ್ಳಿ. ಕೇವಲ ಸಾಹಿತ್ಯಸಕ್ತನಿಗಾಗಲಿ ಅಥವಾ ಕೇವಲ ಸಂಗೀತಗಾರನಿಗಾಗಲಿ ಸಂಪೂರ್ಣವಾಗಿ ದೊರಕದದು. ಸ್ವಲ್ಪ ಮಟ್ಟಿಗೆ ಎರಡರ ಜ್ಞಾನವಿದ್ದವನಿಗೆ ಅಷ್ಟೇ ದಕ್ಕಬಲ್ಲದು. ಇಲ್ಲದಿದ್ದರೆ ಹೆಣ್ಣಿನ ವ್ಯಾಮೋಹದ, ವಿಷಯ ಲಂಪಟ ಮೋಹನ ಲಾಲನನ್ನಲ್ಲದೇ ಬೇರೇನನ್ನೂ ನಾವು ಅದರಲ್ಲಿ ದಕ್ಕಿಸಿಕೊಳ್ಳಲಾರೆವು.

ಬರೀ ಪಾಣಿಪತ್ ಕದನ ರಕ್ಕಸತಂಗಡಗಿ ಕದನಗಳ ಇಸ್ವಿಗಳಿಗಷ್ಟೇ ಸೀಮಿತವಾಗಿದ್ದ ನಮ್ಮ ಇತಿಹಾಸದ ಜ್ಞಾನಕ್ಕೆ ಐತಿಹಾಸಿಕ ಪ್ರಜ್ಞೆಗಳನ್ನು ಅನಾವರಣಗೊಳಿಸಿದ್ದು,ಅವುಗಳಿಗೆ ಒಂದು ಹೊಸದಾದ ಆಯಾಮ ದೊರಕಿಸಿದ್ದೇ ಸಾರ್ಥ, ಆವರಣದಂತಹ ಐತಿಹಾಸಿಕ ನೆಲೆಯಲ್ಲಿರುವ ಅವರ ಕಾದಂಬರಿಗಳು. ಮೊದಲ ಸಲ ಸಾರ್ಥ ಓದಿದಾಗ ದಂಗಾಗಿ ಬಿಟ್ಟಿದ್ದೆ. ‘ಸಾರ್ಥ’ ಎಂದರೆ ಅಲ್ಲಿಂದಿಲ್ಲಿಗೆ ಸಂಚರಿಸುವ ವ್ಯಾಪಾರಿಗಳ ಗುಂಪು ಎಂದಷ್ಟೇ ಗೊತ್ತಿದ್ದ ನನಗೆ ಸಾರ್ಥದಲ್ಲಿ ಏನೆಲ್ಲಾ ಉಂಟು? ಬಡಗಿ,ಅಡುಗೆ ಮಾಡುವವನು, ಡೇರೆ ಹಾಕುವವನು, ವೈದ್ಯ, ಪಶುವೈದ್ಯ, ಕಮ್ಮಾರರು, ಜನ ಹಾಗೂ ಪದಾರ್ಥಗಳನ್ನು ಹೊರಲು ಆನೆ, ಕುದುರೆ, ಕತ್ತೆ ಗಳು, ಕುದುರೆ ಗಾಡಿಗಳು, ವಿದ್ಯಾರ್ಥಿಗಳು, ಪ್ರವಾಸಿಗಳು, ಸನ್ಯಾಸಿಗಳು, ಧರ್ಮ ಪ್ರಚಾರಕರು.. ಇಡಿಯ ಪ್ರಪಂಚದ ಒಂದು ಸಣ್ಣ ತುಂಡು - ಮಿನಿ ಪ್ರಪಂಚವೇ ಸಾರ್ಥದಲ್ಲಿರುತ್ತದೆ ಎಂದು ಓದಿದಾಗ ಅರೆ ಹೌದಲ್ಲ ಎನ್ನಿಸಿದ್ದುಂಟು. ಸಾರ್ಥ ನನ್ನ ಮೆಚ್ಚಿನ ಕಾದಂಬರಿ. ಅದರಲ್ಲೂ ಶಂಕರ, ಮಂಡನ ಮಿಶ್ರ, ಭಾರತಿ, ಕುಮಾರಿಲ ಭಟ್ಟ ಇತ್ಯಾದಿ ವೃತ್ತಾಂತಗಳು ಬಹಳವೇ ಇಷ್ಟ. 98 ರಲ್ಲಿ ಆ ಕಾದಂಬರಿ ಬಂದಾಗ ಕಸ್ತೂರಿಯಲ್ಲಿ ಕುಮಾರಿಲ ಭಟ್ಟರು ಪ್ರಾಯಶ್ಚಿತ್ತ ರೂಪವಾಗಿ ಹೊಟ್ಟಿನ ಬೆಂಕಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಸಂಗದ ವಿವರಣೆ ಇತ್ತು ಪುಸ್ತಕ ಪರಿಚಯ ಕಾಲಮ್‌ನಲ್ಲಿ. ಸುಮಾರು ದಿನಗಳವರೆಗೆ ಸಂಕಟಪಟ್ಟಿದ್ದೆ ನಾನೇ ಆ ಹೊಟ್ಟಿನ ಶಾಖದಲ್ಲಿ ಬೆಂದಂತೆ. ನಾನಾಗ ಅಮ್ಮನ ಮನೆಯೆಂದು ಇಲ್ಕಲ್ ಬಳಿ ಹಳ್ಳಿಗೆ ಹೋಗಿದ್ದೆ. ಅಲ್ಲಿ ಇಲಕಲ್ಲಿನಲ್ಲಿ ಇದ್ದದ್ದೇ ಒಂದು ಬುಕ್ ಸ್ಟಾಲ್. ಬಸವರಾಜ್ ಬುಕ್ ಡಿಪೋ ಅಂತ. ಅವನ ಅಂಗಡಿಗೆ ಹೋಗಿ ಸಾರ್ಥ ಕೇಳಿದೆ . “ಅಕ್ಕೋರ, ಇಲ್ಲಿ ಯಾರು ಓದ್ತಾರ್ರಿ ಅವನ್ನೆಲ್ಲ? ಮತ್ತ ಭಾಳ ಬಿರಿ ಪುಸ್ತಕರೀ..ಮಾರಾಟ ಆಗಂಗಿಲ್ರಿ. ಅದಕ್ಕೇ ತರಸಂಗಿಲ್ರೀ” ಅಂದುಬಿಟ್ಟ. ಬಿಜಾಪುರಕ್ಕೆ ವಾಪಸ್ ಹೋಗಲು ಇನ್ನೂ ವಾರವಿತ್ತು. ವಾರಗಟ್ಟಲೆ ಅದನ್ನು ಓದದೇ ಇರುವುದು ಹೇಗೆ? ಅಂಗಡಿಯವನಿಗೆ ದುಂಬಾಲು ಬಿದ್ದು ಸ್ಪೀಡ್ ಪೋಸ್ಟ್ ನ ಎಕ್ಸ್ಟ್ರಾ ದುಡ್ಡು ಕೊಟ್ಟು ಆ ಪುಸ್ತಕವನ್ನು ತರಿಸಿಯಾಯಿತು. ಅಂಥ ಹಳ್ಳಿಯಲ್ಲಿ ರಾತ್ರಿಯೆಲ್ಲ ಕರೆಂಟ್ ಇರುತ್ತಿರಲಿಲ್ಲ. ಚಿಮಣಿ, ಕಂದೀಲುಗಳ ಬೆಳಕಲ್ಲಿ ಎರಡು ರಾತ್ರಿ ಹಗಲುಗಳಲ್ಲಿ ಅದನ್ನ ಗಬಾ ಗಬ ಓದಿಯಾಯಿತು. ಹೀಗೆ ಬೆಂಬಿಡದೆ ಕಾಡಿ ಓದಿಸಿಕೊಳ್ಳುವ ತಾಕತ್ತು ಬರೀ ಭೈರಪ್ಪನವರ ಪುಸ್ತಕಗಳಿಗೆ ಮಾತ್ರ. ಸಾರ್ಥ ಹಿಂದು - ಬೌದ್ಧ ಧರ್ಮಗಳ ಸಂಘರ್ಷದ ಕಾಲಘಟ್ಟದ ಕಥೆ ಹೇಳಿದರೆ ಆವರಣ ಹಿಂದೂ - ಮುಸ್ಲಿಂ ಕಾಲಘಟ್ಟದ ಕಥೆ ಹೇಳುತ್ತದೆ ಹಂಪಿಯ , ಕಾಶಿಯ ವಿಶ್ವನಾಥನನ್ನು ಜೊತೆ ಜೊತೆಯಾಗಿ ಕಣ್ಣೆದುರಿಗೆ ತಂದುಬಿಡುತ್ತಾರೆ ಭೈರಪ್ಪ ಇದರಲ್ಲಿ. ಭೀಭತ್ಸರಸವನ್ನು ಓದಿಯೂ ಅನುಭವಿಸಬಹುದು ಎನ್ನುವುದು ಅರ್ಥವಾದದ್ದೇ ಆವರಣದ ಕೆಲವೊಂದು ವಿವರಗಳನ್ನು ಓದುವಾಗ. ಅದರ ಮುನ್ನುಡಿಯಲ್ಲಿ ಅವರು “ಸತ್ಯಶೋಧನೆಯಲ್ಲಿ ಓದುಗನು ಲೇಖಕನಷ್ಟೇ ಪಾಲುದಾರ ಪಾತ್ರಗಳನ್ನಾಗಲಿ ಸನ್ನಿವೇಶಗಳನ್ನಾಗಲಿ ಸತ್ಯದ, ಕಲಾ ಸತ್ಯದ ವಸ್ತು ನಿಷ್ಠೆಯಿಂದ ಗ್ರಹಿಸಿ ಅವುಗಳ ಭಾವವನ್ನು ಆಸ್ವಾದಿಸಬೇಕೇ ಹೊರತು ವೈಯಕ್ತಿಕ ರಾಗ ದ್ವೇಷಗಳಿಂದ ಉದ್ರೇಕಗೊಳ್ಳಬಾರದು ಎಂದು ಹೇಳಿರುವುದು ಅಕ್ಷರ ಸತ್ಯ. ಅದರಲ್ಲಿ ಶಕ್ತಿಯೇ ಧರ್ಮ,ಶಕ್ತ ವಲ್ಲದ್ದು ಧರ್ಮ ಹೇಗಾದೀತು ಎಂಬ ತರ್ಕ ಸ್ಫುಟವಾಯಿತು ಅನ್ನುವ ಮಾತೊಂದು ಬರುತ್ತದೆ ಯಾವಾಗಲೂ ಇದುವೇ ಐತಿಹಾಸಿಕ ಸತ್ಯವೇನೋ ಅನಿಸುತ್ತದೆ ಶಕ್ತವಾದದ್ದು ದುರ್ಬಲವಾದದನ್ನು ತನ್ನೊಳಗೆ ಎಳೆದುಕೊಂಡು ಬಿಟ್ಟಿದೆ ಅಂತ. ಡಾರ್ವಿನ್ ನ ವಿಕಾಸವಾದ ನೆನಪಾಗುತ್ತದೆ.
“ ಒಳಗಿನದನ್ನೆಲ್ಲ ಸುರಿದುಕೊಂಡರೂ ನಮ್ಮನ್ನು ತಕ್ಕಡಿಗೆ ಹಾಕುವುದಿಲ್ಲವೆಂಬಂಥ ಒಬ್ಬ ಆತ್ಮೀಯ ಸ್ನೇಹಿತನಿದ್ದರೆ….ಎಲ್ಲ ಜೀವಿಗಳ ಹಂಬಲದ ಪ್ರತೀಕವೆನಿಸುತ್ತದೆ ಈ ಮಾತು. ನಾವೆಷ್ಟೇ ಹೋರಾಡಿದರೂ ನಾವು ನಮ್ಮ ಸಂಸ್ಕಾರದ ಅಡಿಯಾಳುಗಳು, ವ್ಯವಸ್ಥೆ ಯ ಒಂದು ಅಂಗಗಳಷ್ಟೇ ಎಂಬುದು ಲಕ್ಷ್ಮಿ ಮತ್ತು ಪ್ರೊಫೆಸರ್ ಪಾತ್ರಗಳು ಮಾಡುತ್ತವೆ. ಒಟ್ಟಿನಲ್ಲಿ ಭೈರಪ್ಪನವರ ಕೃತಿಗಳ ಬಗ್ಗೆ ಎಷ್ಟು ಮಾತಾಡಿದರೂ ಕಡಿಮೆ. ಅವರು ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆಗೆ ಹೋಲಿಕೆಯೇ ಇಲ್ಲ ನಿಜವಾದ ಲೇಖಕನಿಗೆ ಪ್ರಶಸ್ತಿ ಸನ್ಮಾನಗಳೆಲ್ಲ ಬರೀ ನಿಮಿತ್ತ. ಅವನ ಶ್ರಮ ಸಾರ್ಥಕವಾಗುವುದು ಅವನ ಕೃತಿಗಳನ್ನು ಓದುವ, ಅರ್ಥೈಸಿಕೊಳ್ಳುವ ಓದುಗರು ದೊರೆತಾಗ ಮಾತ್ರ. ಅಂತಹ ಅಗಣಿತ ಓದುಗರು ಭೈರಪ್ಪನವರಿಗಿದ್ದಾರೆಂಬುದು ನಿರ್ವಿವಾದ. ಕನ್ನಡ ಸಾಹಿತ್ಯ ಲೋಕದಲ್ಲಿ ಅವರು ಪಡೆದ ವಿಶಿಷ್ಟವಾದ ಸ್ಥಾನಮಾನಕ್ಕೆ ಪರ್ಯಾಯ ಎನ್ನುವುದಿಲ್ಲ.