’ಅನಿವಾಸಿ’ (KSSVV) ನಡೆದು ಬಂದ ದಾರಿ ಭಾಗ -1 ಡಾ. ಶ್ರೀವತ್ಸ ದೇಸಾಯಿ ಬರೆದ ಲೇಖನ

ವಿನ್ಯಾಸ: ಉಮಾ ವೆಂಕಟೇಶ್

(ಕನ್ನಗಡಿಗರು ಹೊರದೇಶಕ್ಕೆ ಹೋಗುವಾಗ ತಮ್ಮ ಜೊತೆ ಹೊತ್ತೊಯ್ಯಲು ಸಾಧ್ಯವಾಗುವುದು ಕೆಲವೇ ವಸ್ತುಗಳನ್ನು.  ಆದರೆ ವಲಸೆ ಹೋದ ದೇಶಗಳಲ್ಲಿ ಮತ್ತೆ ಬದುಕನ್ನು ಕಟ್ಟಿಕೊಳ್ಳುವಾಗ ಅವರಿಗೆ ಅಂದುಕೊಂಡದ್ದಕ್ಕಿಂತ ಹೆಚ್ಚನ್ನು  ಹೊತ್ತು ತಂದಿರುವುದು ಅರಿವಾಗುತ್ತದೆ. ಅರಿವಿಲ್ಲದಂತೆಯೇ ಅವರೊಡನೆ ಬಂದ  ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ, ಸಂಗೀತ, ನೃತ್ಯ ಎಲ್ಲ ಅವರ ಗುರುತುಗಳಾಗುತ್ತವೆ. ವಿದೇಶಿ ನೆಲದಲ್ಲಿ ಈ ಮೌಲ್ಯಗಳು ಸ್ವದೇಶೀ ತುಣುಕುಗಳನ್ನು ಸೃಷ್ಟಿಸುತ್ತವೆ. ಈ ನೆಲದಲ್ಲಿ ಬೆರೆಯಲು ಸಮಾನ ಆಸಕ್ತಿಯಿರುವ ಮನಗಳು ತುಡಿಯುತ್ತವೆ. ಸಮುದಾಯಗಳು ಕಲೆಯುತ್ತವೆ. ಕನ್ನಡದ ಬದುಕು ಮತ್ತೆ  ಜೊತೆಯಾಗಿ ಮುಂದುವರೆಯುತ್ತದೆ.

 ಆದರೆ ಹಲವು ದಶಕಗಳ ಕಾಲ ಇಲ್ಲಿ ಸಾಹಿತ್ಯಕ್ಕಾಗಿ ಯಾವುದೇ ನಿಗಧಿತ ಗುಂಪಿರಲಿಲ್ಲ. ಆದರೆ ಸಾಹಿತ್ಯದಲ್ಲಿ ಆಸಕ್ತಿಯಿರುವ ಕೆಲವರು ಒತ್ತಟ್ಟಿಗೆ ಬಂದದ್ದು 2014 ರಲ್ಲಿ. ಕೇವಲ ನಾಲ್ಕು ತಿಂಗಳ ನಂತರ ಗುಂಪಿನ ಮೊದಲ ಅಧಿಕೃತ ಸಭೆ ನಡೆಯುವ ಹೊತ್ತಿಗೆ ಈ ಸಂಖ್ಯೆ ದ್ವಿಗುಣಗೊಂಡಿತ್ತು.ಇವರಲ್ಲಿ ಯಾರೂ ಕನ್ನಡವನ್ನೇ ಓದಿದವರಿರಲಿಲ್ಲ. ಪ್ರತಿಯೊಬ್ಬರೂ ಅತ್ಯಂತ ಬ್ಯುಸಿ ಎನ್ನುವ ಜೀವನ ಶೈಲಿಯ ವೃತ್ತಿಗಳಲ್ಲಿ ಇದ್ದವರೇ.

 ಯಾವುದೇ ಸಂಘ-ಸಂಸ್ಥೆಗಳ ಹಣಕಾಸಿನ ಸಹಾಯದ ಹಂಗಿಲ್ಲದಂತೆ ಅನಿವಾಸಿಯ ಕೆಲವರು ಸದಸ್ಯರು  ಸ್ವಯಂ ಪ್ರೇರಿತರಾಗಿ ದೇಣಿಗೆಯ ಮೂಲಕ ಅಂತರ್ಜಾಲದ ಸಾಹಿತ್ಯ ಜಗಲಿಯನ್ನು ನಿಭಾಯಿಸುತ್ತಿದ್ದಾರೆ. ಈ ಜಾಲ ತಾಣ ಐದು ವರ್ಷಕ್ಕೂ ಹೆಚ್ಚು ಕಾಲದಿಂದ ಪ್ರತಿ ಶುಕ್ರವಾರ ಈ ದೇಶದಲ್ಲಿರುವ ಕನ್ನಡ ಬರಹಗಾರರ ಒಂದು ಬರಹವನ್ನು ತಪ್ಪದೆ ಪ್ರಕಟಿಸುತ್ತ ಬಂದಿದೆ.

ಕನ್ನಡ ನಾಡಿನ ಸಮಸ್ತ ಜನಸ್ತೋಮಕ್ಕೆ ತೆರದ ಬಾಗಿಲಿನ ಪಾಲಿಸಿಯನ್ನು ಅನುಸರಿಸುವ ಹಲವು ಅಂತರ್ಜಾಲ ಸಾಹಿತ್ಯಕ ತಾಣಗಳು ಕೂಡ ಹಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಲು ಶ್ರಮಪಡುತ್ತವೆ. ಹಲವಾರು ತಾಣಗಳು ಮುಂದುವರೆಯಲಾಗದೆ ಮುಚ್ಚಿಹೋಗಿವೆ.ಅಂಥದ್ದರಲ್ಲಿ ದೂರದ್ದೊಂದು ಪುಟ್ಟ ದ್ವೀಪದ ಬಹಳ ಕಡಿಮೆ ಎನ್ನುವಷ್ಟು ಕನ್ನಡಿಗರಿರುವ ಯುನೈಟೆಡ್ ಕಿಂಗ್ಡಂ ನಲ್ಲಿ ಬೆರಳೆಣಿಕೆಯಷ್ಟು ಕನ್ನಡದಲ್ಲಿ ಸಾಹಿತ್ಯ ಬರೆಯುವ ಮತ್ತು ಓದುವ ಜನರು ನಡೆಸುತ್ತಿರುವ  ಅನಿವಾಸಿ ಸಾಹಿತ್ಯ ಜಗಲಿಯ ಸಾಧನೆ ದೊಡ್ಡದೇ. ಸಾಹಿತ್ಯದಲ್ಲಿ ತೊಡಗಿಕೊಂಡ ಈ ಗುಂಪಿನಲ್ಲಿ ಯಾರೂ ಮುಖಂಡರಲ್ಲ. ಯಾವುದೇ ಪದವಿಗಳಿಲ್ಲ. ಈ ಅನುಕ್ರಮದಲ್ಲಿ ಅನಿವಾಸಿ ಐದು ಮುಗಿಸಿ ಆರು ವರ್ಷಗಳನ್ನು ಸಮೀಪಿಸುತ್ತಿದೆ. ಈ ಸಮಯದಲ್ಲಿ  ಅನಿವಾಸಿ ನಡೆದು ಬಂದ ಹಾದಿಯ ಹಿನ್ನೋಟವೇ ಈ ಸರಣಿ ಮಾಲೆ.

ಮೊದಲಿಗೆ ಈ ಗುಂಪಿನ ಹಿರಿಯರಾದ ಶ್ರೀವತ್ಸ ದೇಸಾಯಿಯವರ ಬರಹ. ಹುಟ್ಟಿನಿಂದ ಈವರೆಗೆ ಅನಿವಾಸಿಯ  ಬಹುತೇಕ ಪ್ರತಿ ಸಭೆಯ ನಿಮಿಷಗಳನ್ನು ದಾಖಲಿಸಿ, ಎಲ್ಲ ಬರಹಗಳ ಕಡತವನ್ನು  ಕಾದಿರಿಸಿ, ಫೋಟೋಗಳ ಸಮೇತ ಜೋಪಾನವಾಗಿಟ್ಟು ಈ ಗುಂಪನ್ನು ಕಾದಿರುವ ದೇಸಾಯಿಯವರು ಅತ್ಯಂತ ಉತ್ಸಾಹದಿಂದ ಅನಿವಾಸಿಯ ಚಟುವಟಿಕೆಗಳಲ್ಲಿ ತೊಡಗಿಕೊಂಡವರು. ಪ್ರತಿ ಬರಹಕ್ಕೆ ಸ್ಪಂದಿಸಿ ಉತ್ತೇಜನದ ಮಾತುಗಳನ್ನು ಆಡಿ ಬರಹಗಾರರಿಗೆ ಪ್ರೋತ್ಸಾಹವನ್ನು ನೀಡಿದವರು. ಈ ಗುಂಪಿನಲ್ಲಿ ಒಂದು ವ್ಯವಸ್ಥೆಗೆ ಮಾರ್ಗದರ್ಶನವನ್ನು ನೀಡಿದವರು. ಹೀಗಾಗಿ ಅನಿವಾಸಿಯ ಇದುವರೆಗಿನ ಪಯಣದ ಬಗ್ಗೆ ಗುರುತರವಾದ ದಾಖಲೆಗಳ ಸಮೇತ  ಲೇಖನವನ್ನು ಬರೆದುಕೊಡಿ ಎಂದು ಕೋರಿದಾಗ ತಮ್ಮೆಲ್ಲ ಕಡತಗಳ ಮೇಲೆ ಕಣ್ಣು ಹಾಯಿಸಿ  ಅನಿವಾಸಿಗಾಗಿ  ಯಾವತ್ತಿಗೂ ಬೆಲೆಯುಳ್ಳ ಲೇಖನವನ್ನು ಬರೆದುಕೊಟ್ಟಿದ್ದಾರೆ. ಅನಿವಾಸಿ ನಡೆದು ಬಂದ  ದಾರಿಯ ಕಡೆ ಒಂದು ಸಮಗ್ರ ನೋಟವನ್ನು ಹರಿಸಿದ್ದಾರೆ.  ಅನಿವಾಸಿಯ ಜೊತೆಗಿನ ತಮ್ಮ ವಯಕ್ತಿಕ ಹಾದಿಯನ್ನೂ ಮೆಲುಕು ಹಾಕಿದ್ದಾರೆ.ಅದರ ಮೊದಲ ಕಂತಿದು.

ಸಮಸ್ತರಿಗೂ ದೀಪಾವಳಿಯ ಶುಭಾಶಗಳೊಂದಿಗೆ ಈ ಸರಣಿಯ ಆರಂಭ –ಡಾ.ಪ್ರೇಮಲತ ಬಿ. )

’ಅನಿವಾಸಿ’ಯ ಹುಟ್ಟು:

ಅದೊಂದು ಅಮೃತ ಘಳಿಗೆ!

(1) 19-10-2013, ಯೂಟೋಕ್ಸಿಟರ್ ಮೋಟರ್ವೇ ಸರ್ವಿಸ್ ಸ್ಟೇಷನ್ (A 50 Uttoxeter)

ಎಲ್ಲಿದೆ ಯೂಟೋಕ್ಸಿಟರ್? ’ಏನ ಕೇನ ಪ್ರಕಾರೇಣ…’ ಕೆಲವು ಊರುಗಳು ಪ್ರಸಿದ್ಧವಾಗುತ್ತವೆಯಲ್ಲವೆ? ಭೌಗೋಳಿಕವಾಗಿ ಇಂಗ್ಲೆಂಡಿನ ಮಧ್ಯವರ್ತಿ ಸ್ಥಳ ಈ ಊರು. ಕೆಲವು ಯು.ಕೆ. ವಾಸಿ ಸಾಹಿತ್ಯಾಸಕ್ತರು ಆ ದಿನ ಅಲ್ಲಿ ಕೂಡಿದಾಗ ಕ ಸಾ ಸಾಂ ವಿ ವೇ(KSSVV) ದ ಹುಟ್ಟು ಆಯಿತೆಂದು ಹೇಳಬಹುದು. ಆಗ ಕಾರ್ಡಿಫ್ ನಲ್ಲಿ ವಾಸಿಸುತ್ತಿದ್ದ ಡಾ.ಉಮಾ ವೆಂಕಟೇಶ್, ಮ್ಯಾಂಚಸ್ಟರ್ ಕಡೆಯಿಂದ ಡಾ ವತ್ಸಲಾ ರಾಮಮೂರ್ತಿ, ಡಾರ್ಬಿಯಿಂದ ಡಾ ಕೇಶವ ಕುಲಕರ್ಣಿ, ಸೌತ್ ಯಾರ್ಕ್ಶೈರ್ ನಿಂದ ಡಾ ಜಿ .ಎಸ್. ಶಿವಪ್ರಸಾದ್ ಮತ್ತು ಡೋಂಕಾಸ್ಟರಿನಿಂದ ಡಾ. ಶ್ರೀವತ್ಸ ದೇಸಾಯಿ ಆ ದಿನ ಬೆಳಿಗ್ಗೆ ಅಲ್ಲಿ ಕೂಡಿದ್ದರು.

ಅದಕ್ಕೂ ಮೊದಲು ಒಬ್ಬೊರಿಗೊಬ್ಬರು ಸಮಕ್ಷಮ ಭೇಟಿಯಾಗಿ ಕೆಲವರಷ್ಟೇ ಸ್ವಲ್ಪ ಪರಿಚಿತರಾಗಿದ್ದರೂ ಎಲ್ಲರೂ ಒಬ್ಬೊರನ್ನೊಬ್ಬರು ನೋಡಿರಲಿಲ್ಲ. ಉಮಾ ಅವರು ಪ್ರತ್ಯೇಕವಾಗಿ ಎಲ್ಲ್ರನ್ನು ಈ-ಮೇಲಿನ ಮುಖಾಂತರ ಈ ಮೊದಲೇ ಸಂಪರ್ಕಿಸಿದ್ದರು. ಕೆಲವರೊಡನೆ ಫೋನಿನಲ್ಲಿ ಮಾತಾಡಿದ್ದರು. ಯು ಕೆ ಕನ್ನಡಿಗರಲ್ಲಿ ಕನ್ನಡದ ”ವಿಚಾರ ವೇದಿಕೆ”ಯನ್ನು ಶುರು ಮಾಡಬೇಕೆಂಬ ಅದಮ್ಯ ಆಸೆ ಉಮಾ ಅವರಲ್ಲಿ ಬಹುದಿನಗಳಿಂದಲೂ ಜ್ವಲಂತವಾಗಿತ್ತು. ಹೇಗೆ ಪ್ರಾರಂಭ ಮಾಡಬೇಕು? ಯಾರನ್ನೆಲ್ಲ ಕೂಡಿಸಬೇಕು? ಯಾವ ಸ್ಥಳದಲ್ಲಿ? ಈ ಪ್ರಶ್ನೆಗಳು ಈಗ ಬಹು ಸುಲಭ ಅನಿಸಿದರೂ, ಆಗ ಅದೊಂದು ಕಠಿಣ ಸಮಸ್ಯೆಯೇ ಆಗಿತ್ತು.

1987 ರ ಸಂದೇಶ ’ಕೈಬರಹ’ ಸಂಚಿಕೆಗಳು

ಹಾಗೆ ನೋಡಿದರೆ ಯು.ಕೆ. ದಲ್ಲಿಯ ಕನ್ನಡಿಗರಲ್ಲಿ ಒಂದು ಕನ್ನಡದ ’ಪತ್ರಿಕೆ-ವೇದಿಕೆ’ ಪ್ರಾರಂಭ ಮಾಡುವ ವಿಚಾರ ಹೊಸದೇನೂ ಆಗಿರಲಿಲ್ಲ. ಕನ್ನಡವನ್ನು ಹೊರದೇಶದಲ್ಲಿ ವಾಸಿಸುವ ಕನ್ನಡಿಗರಲ್ಲಿ ಮತ್ತು ಅವರ ಮುಂದಿನ ಪೀಳಿಗೆಯಲ್ಲಿ

ಸಂದೇಶದ ಆಗಿನ ಸಂಪಾದಕರು

ಜೀವಂತ ಉಳಿಸಿ ಕೊಳ್ಳಬೇಕಾದರೆ ಇಂಥದೊಂದು ಮಾಧ್ಯಮದ ಅವಶ್ಯಕತೆಯಿದೆಯೆಂದಲೇ ಯು .ಕೆ. ಕನ್ನಡ ಬಳಗ ಆರಂಭದ ವರ್ಷಗಳಲ್ಲಿ ’ಸಂದೇಶ” ಎನ್ನುವ ’ಕೈಬರಹ”ದ ಪತ್ರಿಕೆಯನ್ನು 1984ರಲ್ಲಿ ಆರಂಭ ಮಾಡಿತ್ತು. ವತ್ಸಲಾ ಅವರಿಗೆ ಅದರ ಪ್ರತ್ಯಕ್ಷ ವೈಯಕ್ತಿಕ ಅನುಭವವಿತ್ತು ಸಹ.

ಆ ಮಾತಿಗೆ ಈಗ ಮೂವತ್ತೈದು ವರ್ಷಗಳು ಸಂದಿವೆ. ಎಲ್ಲರಿಗೂ ’ಬರಹ’ ಎಂಬ ಕನ್ನಡದ ಗಣಕಯಂತ್ರ ತಂತ್ರಾಂಶವಾದ ಪರಿಚಯವಾಗಲು ಪ್ರಾರಂಭವಾಗಿತ್ತು. ಆಗ ತಾನೆ ಇಂಟರ್ನೆಟ್ ತುಂಬ ’ಬ್ಲಾಗ್’ ಗಳು ದಿನೇ ದಿನೇ ಹುಟ್ಟುತ್ತಿದ್ದವು. ಇತ್ತಿತ್ತಲಾಗಿ ಕೆಲವು ತಿಂಗಳುಗಳಿಂದಲೇ ಇಂಟರ್ನೆಟ್ಟಿನಲ್ಲಿ ಕನ್ನಡ ಬ್ಲಾಗ್ ಅಥವಾ ಮ್ಯಾಗಝಿನ್ ತೆಗೆಯ ಬೇಕು, ಯು .ಕೆ. ಕನ್ನಡಿಗರು ಅದರಲ್ಲಿ ಬರೆಯಲು ಅವಕಾಶವಿರಬೇಕೆಂದು ಉಮಾ ವೆಂಕಟೇಶ್ ಮತ್ತು ಡಾ ಜಿ ಎಸ್ ಎಸ್ ಪ್ರಸಾದರು ಕನ್ನಡ ಸಾಹಿತ್ಯಾಸಕ್ತರೊಂದಿಗೆ ಮಾತಾಡುತ್ತಿದ್ದರೆಂದು ತಿಳಿದು ಬಂದಿತ್ತು. ಅವರಿಬ್ಬರು ಕನ್ನಡ ಬಳಗದಲ್ಲಿ ಕಮಿಟಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅದಲ್ಲದೆ ಅವರು ಕನ್ನಡ ಬಳಗದಿಂದ ಹೊರಡುತ್ತಿದ್ದ ’ಸಂದೇಶ’ ಪತ್ರಿಕೆಯ ಸಂಪಾದಕ ಮಂಡಲಿಯಲ್ಲೂ ಇದ್ದರು.(ಈಗಲೂ ಅದರ ಹಳೆಯ ಸಂಚಿಕೆಗಳು KBUK ವೆಬ್ ಸೈಟಿನಲ್ಲಿ ಓದಲು ಸಿಗುತ್ತವೆ). 1980ರ ದಶಕದಲ್ಲಿ ಈ ದೇಶದಲ್ಲಿ ವಾಸಿಸುತ್ತಿದ್ದ ಕನ್ನಡಿಗರೆಲ್ಲರೂ ಕನ್ನಡ ಬಳಗದ ಸದಸ್ಯರಾಗಿದ್ದಿಲ್ಲ, ಯು ಕೆ ದಲ್ಲಿ ದೂರದೂರದ ಊರುಗಳಲ್ಲಿ ಚದುರಿ ಹೋಗಿದ್ದ ಕನ್ನಡಿಗರಿಗೆ ಬಳಗದ ಎಲ್ಲ ಕಾರ್ಯಕ್ರಮಗಳಲ್ಲಿ ಸೇರುವ ಅವಕಾಶ ಕಾರಣಂತರಗಳಿಂದ ಒದಗಿ ಬರುತ್ತಿರಲಿಲ್ಲ. ಅಂದ ಮೇಲೆ ಕಥೆ, ಕವಿತೆ, ಬರೆಯುವದರಲ್ಲಿ ಪಳಗಿದ, ಬರೆಯುವ ಉತ್ಸಾಹವಿದ್ದವರನ್ನು ಹೇಗೆ ಪತ್ತೆ ಹಚ್ಚಿ ಅವರಿಂದ ಇಂಥ ಒಂದು ದಿಜಿಟಲ್ ಮೀಡಿಯಾದ ಮುಖಾಂತರ ಇದನ್ನು ಮುಂದುವರೆಸಬೇಕು ಅಂತ ತಮ್ಮತಮ್ಮೊಳಗೆ ಚರ್ಚೆ ನಡೆಸುತ್ತಿದ್ದರೇ ಹೊರತು ಅದು ಕನಸಾಗಿಯೇ ಉಳಿದಿತ್ತು. ಒಂದು ದಿನ ಹೇಗೋ ಯಾರೋ ಹೇಳಿದಂತೆ ಟೆಕ್ನಿಕಲ್ ವಿಷಯಗಳಲ್ಲಿ ಉಳಿದವರಿಗಿಂತ ಹೆಚ್ಚು ಪರಿಣಿತಿಯಿದ್ದ ಕೇಶವ ಕುಲಕರ್ಣಿಯವರನ್ನು ಸಂಪರ್ಕಿಸಿ ಆಸಕ್ತರೆಲ್ಲ ಕೂಡಿ ಚರ್ಚೆ ಮಾಡೋಣವೇ ಅಂತ ಕೇಳಿದಾಗ ಕೇಶವ ಅವರ ಪ್ರವಾದಿಯ ನ್ಯೂನೋಕ್ತಿಯಂಥ ಉತ್ತರ: ”ಯಾಕೆ ಕಣಿ ಕೇಳುತ್ತೀರಿ? ಶುರು ಮಾಡಿಬಿಡಿ!” ಹಾಗಾದರೆ ಕೂಡುವಾ ಅಂತ ನಿರ್ಧರಿಸಿದಾಗ ದೇಶದ ಮಧ್ಯದಲ್ಲಿಯ ಕೇಶವ ಅವರೇ ಹುಡುಕಿದ ’ವೆನ್ಯೂ’ ಆ ಯುಟೋಕ್ಸಿಟರ್! ನಮ್ಮವರಲ್ಲಿ ಯಾರೂ ಹೆಸರೇ ಕೇಳಿರದ ಆ ಊರು ಈಗ ಅನಿವಾಸಿಯ ಐತಿಹಾಸಿಕ ದಾಖಲೆಯಲ್ಲಿ ಚಿರಸ್ಮರಣೀಯ ಸ್ಥಾನ ಪಡೆದಿದೆ!

ಅಂದು ಕೂಡಿದ ಐವರು:

ಕೇಶವ ಕುಲಕರ್ಣಿ, ಉಮಾ ವೆಂಕಟೇಶ್, (ಜಿ ಎಸ್ ಎಸ್) ಗುಗ್ಗರಿ ಪ್ರಸಾದ, ವತ್ಸಲಾ ರಾಮಮೂರ್ತಿ, ಶ್ರೀವತ್ಸ ದೇಸಾಯಿ.

ಸಭೆಯ ಪೂರ್ವದಲ್ಲಿ ನಾನು ಮಾಡಿಟ್ಟುಕೊಂಡು ಒಯ್ದ ಟಿಪ್ಪಣಿಗಳು ಹೀಗಿವೆ:

ಪಪ್ರಥಮ ಮೀಟಿಂಗ್, ಯುಟೋಕ್ಸಿಟರ್: (L-R)ಉಮಾ, ವತ್ಸಲಾ, ಕೇಶವ, ಪ್ರಸಾದ್, ಶ್ರೀವತ್ಸ ಫೋಟೋ ಕೃಪೆ: ಕೇಶವ-ಶ್ರೀವತ್ಸ

To discuss;

  1. Mission statement
  2. Constitution:

Who will be members? How to admit? What is our commitment?

3, Communication; How, where to meet?

4, E- magazine? Blog (ಆಗ ತಾನೆ ನಮಗೆ ಬ್ಲಾಗ್ ದ ಕಲ್ಪನೆ ಬರುತ್ತಲಿತ್ತು) How to publish? ನಮಗಾರಿಗೂ ಅನುಭವವಿರಲಿಲ್ಲ. ಬಹುತೇಕ ಎಲ್ಲರಿಗೂ Baraha software ಉಪಯೋಗಿಸಿ ಗೊತ್ತಿತ್ತು. ಆದರೆ ಹೇಗೆ ಪ್ರಕಟಿಸುವದು, ಯಾರಿಗೂ ಗೊತ್ತಿರಲಿಲ್ಲ. (ಶಿಶುವಿನ ಅಂಬೆಗಾಲಿನ ಕ್ಷಣಗಳಿವು. ಈಗ ಇದೆಲ್ಲ ಅತಿ ಸುಲಭ ಅಥವಾ ಹಾಸ್ಯಾಸ್ಪದ ಅನಿಸಿದರೂ ಆಗ ಪ್ರತಿಯೊಂದು ಸಣ್ಣ mole hill ಸಹ ಮೇರುಪರ್ವತವಾಗಿ ಕಾಣುತ್ತಿತ್ತು!)

  1. Money?
  2. Membership: Who all can join? Resignation/termination (this was a very far sighted thought, or premonition because it was to haunt us 5 years later!) ಯಾಕಂದರೆ ನಾನು 20 ವರ್ಷಗಳಿಂದಲೂ ನಮ್ಮೂರಿನ ಒಂದು ವಿಡಿಯೋ ಕ್ಲಬ್ಬಿನ ಸದಸ್ಯನಾಗಿದ್ದೆ. ಅದರ Constitution ದಲ್ಲಿಯೂ ಆ ವಿಷಯದ ಪ್ರಸ್ತಾಪವಿತ್ತು!).

ಚೊಚ್ಚಲು ’ಸಭೆ’

ನಾವು ಕೂಡಿದ ಸ್ಥಳ ಒಂದು ಸಾಮಾನ್ಯ ಮೋಟರ್ವೇ ಸರ್ವಿಸಸ್ ಆಗಿತ್ತು. ನಿಗದಿತ ಸಮಯದಲ್ಲಿ ನಾವೆಲ್ಲ ಬಂದು ಕೂಡಿದೆವು. ಅದು ನಮ್ಮ ಮೊದಲ ಭೇಟಿ. ನಾವು ಒಂದು ರೂಮು ಸಹ ತೆಗೆದುಕೊಡಿರಲಿಲ್ಲ. ಲಭ್ಯವಿತ್ತೋ ಇಲ್ಲವೋ ಗೊತ್ತಿಲ್ಲ. ಒಂದು ಮೂಲೆಯ ಟೇಬಲ್ ಸುತ್ತ ಕುಳಿತು ಶುರುಮಾಡಿದೆವು. ಉಮಾ ಅವರು ತಮ್ಮ ಪೀಠಿಕೆಯಲ್ಲಿ ಮೇಲಿನ ವಿಚಾರಗಳ ಹಿನ್ನೆಲೆ ಕೊಟ್ಟಂತೆ ನೆನಪು.

ನಾಮಕರಣ: ನಮ್ಮ ವಿಚಾರ ವೇದಿಕೆಯನ್ನು ಏನೆಂದು ಕರೆಯುವದು? ಅದರಲ್ಲಿ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಎರಡೂ ಪ್ರಮುಖವಾಗಿರಬೇಕು. ಉದ್ದವಾದರೂ, ಬಾಯಿ ತುಂಬಿದರೂ, ದೀರ್ಘ ಚರ್ಚೆಯಾದ ನಂತರ ಕೊನೆಗೆ ಎಲ್ಲರೂ ಒಪ್ಪಿದ್ದು: ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವಿಚಾರ ವೇದಿಕೆ! ನಂತರ Mission statement ಮತ್ತು ಉದ್ದೇಶಗಳ ಬಗ್ಗೆ ಚರ್ಚೆಯಾಗಿತು. (ಅವನ್ನು ಕನ್ನಡದ ”ಅನಿವಾಸಿ’ ಬ್ಲಾಗ್ ನಲ್ಲಿ ಪ್ರಕಟಿಸಿದ್ದೇವೆ).

ಪ್ರಕಟಣೆ:

ತಾಂತ್ರಿಕ ಪಟು ಕೇಶವ ಅವರ ಸಲಹೆ ಇಲ್ಲಿ ಅಮೂಲ್ಯವಾಗಿತ್ತು. ಅವರಿಗೆ ತಮ್ಮದೇ ಒಂದು ಬ್ಲಾಗ್ ಕೆಲಕಾಲದಿಂದಲೂ ಸಂಭಾಳಿಸಿದ ಅನುಭವವಿತ್ತು. ನಮ್ಮ ಕಿಸೆಯಲ್ಲಿ ಮುಂಗಡ ಹಣ ಇಲ್ಲ. ಇಂಟರ್ನೆಟ್ ನಲ್ಲಿ ಫ್ರೀ ಪೋರ್ಟಲ್ ಗಳು ಬಹಳ ಇವೆ, ಉದಾ: ವರ್ಡ್ ಪ್ರೆಸ್. ಎಂದರು ಕೇಶವ. ಅವಧಿ ಇತ್ಯಾದಿ ಟೈಟಲ್ ಗಳ ಪರಿಚಯ ಮಾಡಿಸಿದರು. ಬರಹಗಳನ್ನು ಮೊದಲು ತಿಂಗಳಿಗೊಮ್ಮೆ ಪ್ರಕಟಿಸುವ ವಿಚಾರವಿತ್ತು. ಮ್ಯಾಗಝಿನ್ ”ಕಸಾಸಾಂವಿವೇ” KSSVV ಎನ್ನುವ ಹೆಸರಿನಲ್ಲೇ ಪ್ರಾರಂಭವಾಯಿತು.. ಮುಂದಿನ ಘಟ್ಟದಲ್ಲಿ ಬುಕ್ ಕ್ಲಬ್ ಸ್ಥಾಪಿಸುವ ವಿಚಾರ ಅಂದೇ ಸುಳಿದಿದ್ದರೂ ಆ ಯೋಜನೆ ಬಹುಸಮಯದ ವರೆಗೆ ಕೈಗೂಡಲಿಲ್ಲ.

ಸುಮಾರು ಎರಡು ಗಂಟೆಗಳಿಗಿಂತ ಹೆಚ್ಚು ಸಮಯ ಚರ್ಚಿಸಿದ್ದಾಯಿತು. ಎಲ್ಲರಲ್ಲಿ ಒಂದು ಹೊಸ ಉತ್ಸಾಹ ತುಂಬಿ ತುಳುಕುತ್ತಿತ್ತು. ಏನೋ ಹೊಸ ದಾರಿಯ ನಾಂದಿ ಹಾಕಿದಂಥ ಅನುಭವ! ಎಲ್ಲರೂ ತಮ್ಮ ತಮ್ಮ ಈ-ಮೇಲ್ ವಿಳಾಸ, ಟೆಲಿಫೋನ್ ನಂಬರು ವಿನಿಮಯ ಮಾಡಿಕೊಂಡು ಆ ಭೇಟಿಯ ನೆನಪಿನಗಾಗಿ ಒಂದು ಗ್ರುಪ್ ಫೋಟೊ (Photo1)ತೆಗೆಸಿಕೊಂಡು ತಿಂಡಿ ತಿಂದು ಒಬ್ಬರನ್ನೊಬ್ಬರು ಬೀಳ್ಕೊಟ್ಟೆವು.

PS: ಆಗ ತಾನೇ ಈ ದೇಶದಲ್ಲಿ ಪಾರ್ಕಿಂಗ್ ಮೇಲೆ ನಿಗಾ ಇಡಲು ಅಲ್ಲಲ್ಲಿ ಕ್ಯಾಮರಾಗಳ ಸ್ಥಾಪನೆಯಾಗಿತ್ತು. ನಮ್ಮ ಕೂಟ ಎರಡು ಗಂಟೆಯ ಗಡವು ದಾಟಿದ್ದರಿಂದ ಒಂದು ವಾರದ ನಂತರ ನನ್ನ ಮನೆಯ ಟಪಾಲಿನಲ್ಲಿ ತೊಂಬತ್ತು ಪೌಂಡಿಗಳ ಫೈನ್ ನೋಟಿಸ್ ಬಂದು ಬಿದ್ದಿತ್ತು. ಜಾಲಜಗುಲಿ ವರ್ರ್ಡ್ ಪ್ರೆಸ್ಸಿನ ಮೂರು ವರ್ಷಗಳ ಚಂದಾ ನಾನೇ ತೆತ್ತ ಲೆಕ್ಕ. ಆದರೂ ಮನಸ್ಸಿಗೆ ಏನೂ ಬೇಜಾರಾಗಲಿಲ್ಲ. ಇಂಥ ಶುಭಾರಂಭವಾದಮೇಲೆ ಅದೊಂದು ಬರೀ ದೃಷ್ಟಿ ಬೊಟ್ಟು ಅಂತ ಸಮಾಧಾನ ಪಟ್ಟುಕೊಂಡೆ!

ಲೇಖನ ಮತ್ತು ಚಿತ್ರಗಳು: ಶ್ರೀವತ್ಸ ದೇಸಾಯಿ

 (ಮುಂದಿನ ವಾರ -ಅನಿವಾಸಿ ನದೆದುಬಂದ ಹಾದಿ… ಭಾಗ ೨)

 

‘ಮಜಾ ವಿತ್ ಸೃಜನ್’ – ಕಿರು ಹಾಸ್ಯನಾಟಕ

ಕನ್ನಡ ಬಳಗದಲ್ಲಿ  ‘ಮಜಾ ವಿತ್  ಸೃಜನ್’ ಕಿರು ಹಾಸ್ಯನಾಟಕ

ರಚನೆ: ಡಾ. ಜಿ.ಎಸ್. ಶಿವ ಪ್ರಸಾದ್

shiva-prasad-with-srujan-lokesh
ಸೃಜನ್ ಜೊತೆಗೆ ಶಿವಪ್ರಸಾದ್

ಹಿನ್ನೆಲೆ ಕನ್ನಡ ಕಿರು ತೆರೆಯ ಕಾಮಿಡಿ ಶೋ ಮಜಾ ಟಾಕೀಸ್ನ ಹೀರೋ/ಸ್ಟಾರ್ ಸೃಜನ್ ಲೋಕೇಶ್ ಅವರು ಕನ್ನಡ ಬಳಗ ಯು.ಕೆ.ಯ ಆಹ್ವಾನದ ಮೇರೆಗೆ ಇಂಗ್ಲೆಂಡಿಗೆ ಬಂದಿದ್ದಾರೆ. ಕನ್ನಡ ಬಳಗ ಏರ್ಪಡಿಸಿದ್ದ ದೀಪಾವಳಿ ಸಂಭ್ರಮದಲ್ಲಿ ಅವರು ವೇದಿಕೆಯ ಮೇಲೆ ಬಂದು, ಇನ್ನೊಬ್ಬ ಪಾತ್ರಧಾರಿಯೊಂದಿಗೆ ಜೊತೆಗೂಡಿ ನಟಿಸಿ ಈ ಕಿರು ನಾಟಕವನ್ನು ಪ್ರದರ್ಶಿಸಲು ಒಪ್ಪಿರುತ್ತಾರೆ. ಆ ಪಾತ್ರಧಾರಿ  ಕನ್ನಡ ಬಳಗದ ಸದಸ್ಯ. 

ದೃಶ್ಯ –  ಒಂದು

ಪಾತ್ರಧಾರಿ ಹಾಡುತ್ತಾ ಪ್ರವೇಶ ಮಾಡುತ್ತಾನೆ: ‘ಬೆಳ್ಳಿ ಮೂಡಿತೋ ಕೋಳಿ ಕೂಗಿತೋ’… ‘ಬೆಳ್ಳಿ ಮೂಡಿತೋ ಕೋಳಿ ಕೂಗಿತೋ’…

ಸೃಜನ್: ಅಲ್ಲ ನೋಡಿ, ನಾನು ಮೂರ್ ದಿವಸದಿಂದ ಇಂಗ್ಲೆಂಡ್ನಲ್ಲಿ ಇದ್ದೀನಿ. ಒಂದು ದಿವಸಾನೂ ಕೋಳಿ ಕೂಗಿದ್ದು ಕೇಳಿಸಲಿಲ್ಲ!

ಪಾತ್ರಧಾರಿ: ಸೃಜನ್, ಅದು ಹೇಗೆ ಸಾಧ್ಯ? ಇಲ್ಲಿ ಜನ ಇರೋ ಕೋಳಿಗಳನ್ನ ಹಿಡ್ಕಂಡು ತಿಂದ್ರೆ, ಕೂಗಕ್ಕೆ ಕೋಳಿ ಇದ್ರೆ ತಾನೇ!

ಒಂದು ವೇಳೆ ಕೆಲವು ಕೋಳಿ ಇನ್ನೂ ಉಳಿದಿದ್ರೆ ಅವು ಚಳಿಗೆ ಬೆಚ್ಚಗೆ ಮಲ್ಗಿರ್ತಾವೆ!

ಇನ್ನೂ ಕೆಲವು ಚುರುಕಾದ ಮರಿ ಕೂಗಿದರೂ ನಿಮ್ಗೆ ಕೇಳಿಸಿಲ್ಲ ಅಂತ ಅನಿಸುತ್ತೆ?

ಸೃಜನ್: ಹೇಯ್, ನಾನೇನು ಕೆಪ್ಪ ಅಲ್ಲ, ದೊಡ್ಡ ದೊಡ್ಡ ಶೋ ನಡುಸ್ಕೊಡ್ತೀನಿ?!

ಪಾತ್ರಧಾರಿ: ಸೃಜನ್ ನಾನು ನಿಮ್ಮನ್ನ ಕೆಪ್ಪ ಅಂದಿಲ್ಲ ರೀ, ನೋಡಿ, ನೀವು ಅಲ್ಲಿಂದ ಬಂದಿದ್ದೀರಿ, ಸ್ವಲ್ಪ ಜೆಟ್ ಲ್ಯಾಗ್ ಇರಬಹದು ಅಷ್ಟೆ … ಹಾಗೆ… ಇಲ್ಲಿ ಮನೆಗಳ ಕಿಟಕಿಗೆ ಡಬಲ್ ಗ್ಲೇಝಿನ್ಗ್ ಹೊಡೆದಿದ್ದಾರೆ. ಹೊರಗೇನಾಗ್ತಿದ್ರು ಒಳಗೆ ಕೇಳಿಸೋಲ್ಲ, ಒಳಗೆ ಕಳ್ಳ ಬಂದು ನಾವು ಬೊಬ್ಬೆ ಹೊಡಕೊಂಡ್ರು ಹೊರಗೆ ಯಾರಿಗೂ ಕೇಳಿಸೋಲ್ಲ!!

ಸೃಜನ್: ಇದ್ಯಂಥ ಲೈಫ್ ರೀ ನಿಮ್ಮದು!! ಬೆಳ್ಳಿ ಮೂಡಿತೋ ಅಂತ ಹಾಡ್ತಾ ಇದ್ದೀರಾ? ಮೂರ್ ದಿವಸದಲ್ಲಿ ನಾನು ಬೆಳ್ಳಿ ಮೂಡಿದ್ದನ್ನು ನೋಡಲೇ ಇಲ್ಲವಲ್ಲ!

ಪಾತ್ರಧಾರಿ: ಸೃಜನ್, ಇದು ಇಂಗ್ಲೆಂಡ್ ರೀ …‘ಸೂರ್ಯ ಮುಳುಗದ ಸಾಮ್ರಾಜ್ಯ’ ಇಲ್ಲಿ ಸೂರ್ಯ ಮುಳುಗಿದರೆ ತಾನೇ ಹುಟ್ಟುಕ್ಕೆ!

ಸೃಜನ್: ಅದೆಲ್ಲ ಹಳೆ ಕಂತೆ ಬಿಟ್ಟಹಾಕ್ರಿ. ನಿಮ್ಮ ಇಂಗ್ಲಂಡ್ Brexit ಆದ್ಮೇಲೆ ಅದ್ಯಾವ ‘ಸೂರ್ಯ ಮುಳುಗದ ಸಾಮ್ರಾಜ್ಯ’ ಅಂತ ಎಲ್ಲರಿಗು ಗೊತ್ತು ಬಿಡ್ರಿ ! ಇಮಿಗ್ರೇಷನ್ ಇಮಿಗ್ರೇಷನ್ ಅಂತ ಎಲ್ಲ ಬಾಗಿಲು ಮುಚ್ಚಿ ಕುತ್ಕೊಂಡ್ರೆ ದೇಶ ಉದ್ದಾರ ಆಗುತ್ತಾ ಹೇಳಿ? ಅದೇನೋ ಗಾದೆ ಇದೆಯಲ್ಲ … ‘ಮಾಡಿದ್ದು ಉಣ್ಣೋ ಮಹರಾಯ’ ಅಂತ…

ಇಂಥ lousy weather ಇದ್ದರೆ ಸೂರ್ಯ ಎಲ್ಲಿ ಕಾಣಿಸ್ತಾನೆ ಹೇಳಿ. ಅಂದ ಹಾಗೆ ಇಲ್ಲಿ ಜನ ಮೂರೂ ಮೂರೂ ದಿವಸಕ್ಕು ಅದೇನೋ Holiday ಅಂತ ಬಿಸಿಲಿರೋ ಜಾಗಕ್ಕೆ ಓಡಿಹೋಗಿ ಬಟ್ಟೆ ಬಿಚ್ಕೊಂಡು ಪಾಪ ಬಿಸಿಲು ಕಾಯಿಸ್ತಾರೆ ಅಂತ ಕೇಳಿದ್ದೆ. ಅಂದ ಹಾಗೆ ನಮ್ಮ ಗೋವ ಬೀಚ್ಗೆ ವಿಮಾನದ ತುಂಬಾ ಬಿಳಿ ಜನ ಸೂರ್ಯನ್ನ ಕಾಣಕ್ಕೆ ಬರ್ತಾರೆ!!

ಇದ್ಯಂಥ ಲೈಫ್ ರೀ ನಿಮ್ದು!

ಪಾತ್ರಧಾರಿ: ಸೃಜನ್, ಸರಿ ನಾನು ಹೊರ್ಡ್ತೀನಿ, Thank you very much.

ಸೃಜನ್: ಅಲ್ಲಾರಿ, ನಿಮ್ಮ ಇಂಗ್ಲಂಡ್ ನಲ್ಲಿ ಜನ ಯಾಕೆ ಎಲ್ಲದುಕ್ಕೂ ಥ್ಯಾಂಕ್ಸ್ ಹೇಳ್ತಾರೆ? ಕೂತರೆ ಥ್ಯಾಂಕ್ಸ್, ನಿಂತರೆ ಥ್ಯಾಂಕ್ಸ್, ಕೆಮ್ಮಿದರೆ sorry, ತೇಗಿದರೆ pardon me! ಇವರೆಲ್ಲ ನಮ್ಮ ಮದುವೆ ಮನೆಗೆ ಅಥವಾ ಸಮಾರಾಧನೆಗೆ ಬಂದು ನೋಡಬೇಕು. ಜನ ಹೇಗೆ ಸಂತೃಪ್ತಿಯಾಗೆ ತರಾವರಿ ತೇಗತಾರೆ ಅಂತ!! ನಿಮ್ಮ ಥರ ಸಾವಿರಾರು ಸಾರಿ Thank you, pardon me ಅಂತಾ ಇದ್ರೆ ನಮ್ಮ ಬಾಯಿ ಬಿದ್ದು ಹೊಗುತ್ತೆ!

ಪಾತ್ರಧಾರಿ: ಸೃಜನ್ ಅವರೇ, ಇಲ್ಲಿ ಜನ ಬರಿ ಮಾತಲ್ಲಿ thanks ಅಂತ ಹೇಳ್ತಾರೆ. ನೀವು ಯಾವತ್ತಾದ್ರು ಜಪಾನ್ ದೇಶಕ್ಕೆ ಹೋಗಿದ್ದಿರ??

ಸೃಜನ್: ಇಲ್ವಲ್ಲ, ಅಲ್ಲಿ ಏನು ವಿಶೇಷ?

ಪಾತ್ರಧಾರಿ: ಅಲ್ಲಿ ಜನ Hello ಮತ್ತೆ Thanks ಹೇಳೋದು ನೋಡಿದ್ರ?? ಪ್ರತಿ ಸಾರಿ ಬಗ್ಗಿ ಬಗ್ಗಿ ಬೆನ್ನು ಮುರ್ಕೊಬೇಕಾಗುತ್ತೆ! England ನಲ್ಲಿ ಬಾಯಿಗೆ ಸ್ವಲ್ಪ ಕೆಲಸ ಅಷ್ಟೆ. ಅಂದ ಹಾಗೆ ಇಲ್ಲಿ ಇರೋ ಮೊಳೆ ಡಾಕ್ಟರ್ಗಳು ಅವ್ರಿಗೆನಾದ್ರು ಜಪಾನೀಸ್ ಭಾಷೆ ಬಂದಿದ್ರೆ … ಅಲ್ಲಿ ಹೋಗಿ ಪ್ರೈವೇಟ್ ಪ್ರಾಕ್ಟೀಸ್ ಮಾಡೇ ಬಿಡ್ತಾಯಿದ್ರು.

ಪಾತ್ರಧಾರಿ: ಅಂದ ಹಾಗೆ Orthpoedic ಡಾಕ್ಟರ್ ಗಳ ಬಗ್ಗೆ ಒಂದು ಜೋಕು ಜ್ಞಾಪಕ್ಕೆ ಬಂತು…

ಸೃಜನ್: ಹೇಳಿ ನೋಡೋಣ…

ಪಾತ್ರಧಾರಿ: ನಮ್ಮ ಪಕ್ಕದ ಮನೆ ಪುಟ್ಟ ಹುಡುಗಿ ಕಾಜಲ್ ಅವಳ ಪ್ರೈಮರಿ ಸ್ಕೂಲ್ನಲ್ಲಿ ಮೇಡಂ ನಿಮ್ಮಪ್ಪ ಏನು ಕೆಲಸ ಮಾಡ್ತಾರೆ ಮರಿ ಅಂತ  ಕೇಳಿದಾಗ ಅವಳು ನಮ್ಮಪ್ಪ Octopus surgeon ಅಂದಳಂತೆ. ಮೇಡಂ ಗೆ ತಲೆಬುಡ ಏನು ತಿಳಿಲಿಲ್ಲ. ಅವತ್ತು ಸಂಜೆ ಕಾಜಲ್ ಅಪ್ಪ ಗಿರೀಶ್ ಸ್ಕೂಲಿಗೆ ಬಂದಾಗ ಅಪ್ಪನನ್ನೇ ಮೇಡಂ  ನೇರವಾಗಿ ಕೇಳಿದರು. ಅಪ್ಪ ತಾನು Orthopedic surgeon ಅಂದಾಗಾ ಮೇಡಂ ಗೆ ಸಕತ್ ನಗುಬಂತು, ಅಪ್ಪ ಮತ್ತು ಕಾಜಲ್ ಕೂಡ ಬಿದ್ದು ಬಿದ್ದು ನಕ್ಕಿದ್ರು.

ಎಲ್ಲ Orthopedic surgeonಗಳು ಇದರ ಬಗ್ಗೆ ಯೋಚಿಸಿರಬೇಕು. ಎಲ್ಲ ಮನುಷ್ಯರಿಗೂ Octopus ತರಹ ಎಂಟು ಕೈ ಕಾಲುಗಳಿದ್ದರೆ ತಮ್ಮ ಪ್ರೈವೇಟ್ ಪ್ರಾಕ್ಟೀಸ್ ಇನ್ನು ಹತ್ತು ಪಟ್ಟು ಹೆಚ್ಚಾಗಿರ್ತಿತ್ತು ಅಂತ!!

ಪಾತ್ರಧಾರಿ: ಸೃಜನ್ ಅವರೇ, ನಿಮಗೆ ಈಗ ಒಂದು ಜೋಕ್ ಹೇಳಿಯಾಯಿತು. ಈಗ ಒಂದು ತಮಾಷೆ ಪದ್ಯ ಓದಬಹುದೇ?

ಸೃಜನ್: ಹೇಳಿ ನೋಡೋಣ.

ಪಾತ್ರಧಾರಿ: ನೀವು ಜನಪ್ರಿಯವಾದ ಡಾ.ಜಿ.ಎಸ್.ಎಸ್ ಅವರ ‘ಎದೆ ತುಂಬಿ ಹಾಡಿದೆನು’ ಕವಿತೆ ಕೇಳಿರಬಹುದು. ಇದನ್ನು ನಮ್ಮ ಬಳಗದ ದಿವಂಗತ ಡಾ.ರಾಜಾರಾಂ ಕಾವಳೆಯವರು ಬೇರೆ ರೀತಿಯಲ್ಲಿ ಬಳಸಿಕೊಂಡು ಹಾಸ್ಯ ಕವನವನ್ನು ರಚಿಸಿದ್ದಾರೆ.

ಇದನ್ನು ನೀವೇ ಯಾಕೆ ಹಾಡಬಾರದು?

ಸೃಜನ್: ಓ.ಕೆ. ಟ್ರೈ ಮಾಡ್ತೀನಿ… ಸೃಜನ್ ಹಾಡುತ್ತಾರೆ…

ಎಡೆಬಿಡದೆ ಮಾಡಿದೆನು ಅಡುಗೆ ನಾನು
ಮನಃ ತೃಪ್ತಿ ಮಾಡಿದಿರಿ ಊಟ ನೀವು.
ಪಾತ್ರಧಾರಿ: ಬರ್ತೀನಿ ಸೃಜನ್ ಅವರೇ, ನಮಸ್ಕಾರ.

srujan-cartoon-1
ಚಿತ್ರ ಕಲೆ: ಲಕ್ಷ್ಮೀ ನಾರಾಯಣ ಗುಡೂರ

*****

ದೃಶ್ಯ 2 ಮತ್ತು ದೃಶ್ಯ 3

ಹಿನ್ನೆಲೆ – ಈ ದೃಶ್ಯದಲ್ಲಿ ಪಾತ್ರಧಾರಿ ಕನ್ನಡ ಬಳಗದ ಕಿರಿಯ ಸದಸ್ಯ. ಅವನು ಇತ್ತೀಚಿನ ದಿನಗಳಲ್ಲಿ ಇಂಗ್ಲೆಂಡ್ ಗೆ ಬಂದಿರುವವರಲ್ಲಿ ಒಬ್ಬ. ಅವನಿಗೆ ಸೃಜನ್ ಜೊತೆ ಮಂಡ್ಯ ಕನ್ನಡದಲ್ಲಿ ಮಾತಾಡುವ ಖಯಾಲಿ!  

ಹಾಡುತ್ತ ಪಾತ್ರಧಾರಿಯ ಪ್ರವೇಶ, “ಗುಂಡಿನ ಮತ್ತೆ ಗಮ್ಮತ್ತು, ಅಳತೆ ಮೀರಿದರೆ ಆಪತ್ತು…”

ಸೃಜನ್: ಅಲ್ಲಾಪ್ಪ, ಇನ್ನು 3 ಘಂಟೆ! ಆಗಲೇ ಗುಂಡಿನ ಬಗ್ಗೆ ಯೋಚಿಸ್ತಾ ಇದ್ದೀಯ?!

ಪಾತ್ರಧಾರಿ: ಸೃಜನ್ ಅಣ್ಣ, ಇದು ಇಂಗ್ಲೆಂಡ್, ಇಲ್ಲಿ ಜನ ಮಧ್ಯಾನ್ಹ ರಾತ್ರಿ ಉಟಕ್ಕೆ ಬೀರ್ ವೈನು ನಾವು ನೀರ್ ಕುಡಿದಂಗೆ ಕುಡಿತಾರೆ. ಮೇಲಾಗಿ ಸ್ಕಾಚ್ ವಿಸ್ಕಿ ಕಂಡ್ ಹಿಡಿದಿದ್ದು ಪಕ್ಕದ ಸ್ಕಾಟ್ ಲ್ಯಾಂಡ್ ನಲ್ಲಿ.

ಸೃಜನ್: ಅಯ್ಯೋ ಅವ್ರ ಅರೋಗ್ಯ ಕೆಟ್ಟರೆ ಆಸ್ಪತ್ರೆಗೆ ದುಡ್ಡು ಯಾರ್ ಕಟ್ತಾರೆ? ನಾವೇನೋ ಇಂಡಿಯಾದಲ್ಲಿ ಪಾರ್ಟಿ ಗೀರ್ಟಿನಲ್ಲಿ ಸೂರ್ಯ ಕೆಳಗೊದ್ಮೇಲೆ ಕುಡಿತೀವಿ.

ಪಾತ್ರಧಾರಿ: ಅಣ್ಣಾ ಇದು ರಾಮರಾಜ್ಯ. ಇಲ್ಲಿ ಆಸ್ಪತ್ರೆ Free, ಕೆಲಸ ಇಲ್ಲ ಅಂತ ಕೈ ಎತ್ ದವ್ರಗೆ ಮನೆ ಮತ್ತೆ ಊಟ ಎಲ್ಲ free!

ಸೃಜನ್: ಎ ಹಂಗಾರೆ ನಾನು ಇಮಿಗ್ರೇಷನ್ ತಗೊಂಡ್ರೆ ಹೇಗೆ, ಪರ್ಮೆನೆಂಟ್ ಆಗಿ ಇಲ್ಲೇ ಇದ್ ಬಿಡನ ಅಂತ ಆಸೆ ಆಗ್ತಾ ಇದೆ!!

ಪಾತ್ರಧಾರಿ: ಪರ್ಪಂಚ್ ದಲ್ಲಿ ಇರೊ ಜನ ಇಂಗ್ಲಂಡ್ ನಲ್ಲಿ ಬಂದು ಸೆಟ್ಲ್ ಆಗ್ತಾರೆ ಅಂತ ಇಲ್ಲಿ ಜನ ಅದೇನೋ Brexit ಅಂತ ಬಾಗಲ್ ಮುಚ್ತಾ ಅವ್ರೆ. ನೀವೇನಾದ್ರು ಇಲ್ಲಿ ಸೆಟ್ಲ್ ಆದ್ರೆ ನಿಮ್ಮ ಕನ್ನಡ ಭಾಷೆ ಇಂಡಿಯಾದಲ್ಲಿ ಬಿಟ್ ಬನ್ನಿ.

ಇಲ್ಲಿ ಯು. ಕೆ. ಕನ್ನಡಿಗರು ಕನ್ನಡ ಮಾತನ್ನು ಮರೆತು ಎಲ್ಲ ಟಸ್ಸ್ ಪುಸ್ ಅಂತ… ಇಂಗ್ಲಿಷಲ್ಲಿ ಮಾತಾಡಿಕೊಂಡು ಮಕ್ಕಳಿಗೂ ಕನ್ನಡ ಕಲಿಸ್ತಿಲ್ಲ, ನೀವು ಅವರಿಗೆಲ್ಲ ಸ್ವಲ್ಪ ಬುದ್ಧಿವಾದ ಹೇಳಿ ಸೃಜನ್ ಅಣ್ಣ…

ಸೃಜನ್: ಹೌದ, ನಾನು ಈಗ ಕನ್ನಡದ ಬಗ್ಗೆ, ಭಾಷೇ ಅಭಿಮಾನದ ಬಗ್ಗೆ ಯು.ಕೆ ಕನ್ನಡಿಗರಿಗೆ ಭಾಷಣ ಶುರುಮಾಡಬಹುದಾ?

ಪಾತ್ರಧಾರಿ: ಅಣ್ಣ ಹಾಗ್ ಮಾಡಬೇಡಿ. ಯಾಕೆ ಅಂದ್ರೆ ಯು.ಕೆ ಕನ್ನಡಿಗರಿಗೆ ಭಾಷಣ ಅಂದ್ರೆ ಅಲರ್ಜಿ! ಭಾಷಣ ಬೇಕಾದ್ರೆ ನೀವು ಇಲ್ಲಿ ಒಂದು ಬುದ್ಧಿ ಜೀವಿಗಳ ಗುಂಪು KSSVV ಅಂತ ಐತೆ, ಅಲ್ಲಿ ಮಾಡ್ ಬಹದು. ಕನ್ನಡ ಬಳಗದಲ್ಲಿ ಭಾಷಣ ತಂದು ನಮ್ಮ ಕಾರ್ಯದರ್ಶಿ ಡಾ.ಪ್ರಸಾದ್ ಅವರು ಎಲ್ರಿಂದ ಸಾಕಷ್ಟು ಚೀಮಾರಿ ಹಾಕುಸ್ಕೊಂಡವ್ರೆ.

ಡಾ.ಪ್ರಸಾದ್ ಅವರು ಹಿಂದೆ ಭಾಷಣ ಮಾಡಿ ಮಾಡಿ… ಅವರು ಎದ್ನಿಂತ್ರೆ ಜನ ಭಾಷ್ಣ ಮಾಡಕ್ಕೆ ನಿಂತವ್ರೆ ಅಂತ ಗಾಬ್ರಿ ಬೀಳ್ತಾರೆ. ಅದ್ಕೆ ಡಾ.ಪ್ರಸಾದ್ ಅವ್ರು ಕನ್ನಡ ಬಳಗದ್ ಫಂಕ್ಷನ್ ನಲ್ಲಿ ಕುಂತೆ ಇರ್ತಾರೆ! ನೀವೇನಾದ್ರು ಈ ಜನಕ್ಕೆ ಹೇಳ್ಬೇಕ್ ಅಂದ್ರೆ ಅವರಿಗೆ ಹಾಡು ಅಥವಾ ಡ್ಯಾನ್ಸ್ ಮೂಲ್ಕ ಹೇಳಿದ್ರೆ ಮಾತ್ರ ಅರ್ಥವಾಗೋದು.

ನೀವು ಇವತ್ತಿನ ಪ್ರೊಗ್ರಾಮ್ ನೋಡಿಲ್ವಾ ಅದು ಬರಿ ಹಾಡು ಅಥ್ವಾ ಡ್ಯಾನ್ಸ್  ಅಷ್ಟೆ…

ಸೃಜನ್: ತುಂಬಾ ಒಳ್ಳೆ ಆಲೋಚನೆ, ಸರಿ ನಾನು ಹಾಡಲ್ಲಿ ಕನ್ನಡಿಗರಿಗೆ ಅಭಿಮಾನ ತುಂಬತೀನಿ… (ಕಂಠ ಸರಿ ಮಾಡಿಕೊಳ್ಳುತ್ತಾ ಹಾಡು ಶುರು ಮಾಡುತ್ತಾರೆ)

ಸೃಜನ್: ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು… (ಎಂದು ಕೆಲವು ನಿಮಿಷ ಹಾಡುತ್ತಾರೆ)

ಪಾತ್ರಧಾರಿ: ಸೃಜನ್ ಅಣ್ಣ ಒಳ್ಳೆ ಸಂದೇಶ ಬಿಡಿ, ಮತ್ತೊoದು ವಿಚಾರ…

ಸೃಜನ್: ಇನ್ನೆನಪ್ಪ?

ಪಾತ್ರಧಾರಿ: ಇತ್ತೀಚ್ಗೆ ಯು.ಕೆ ನಲ್ಲಿ ಇರೋ ಕನ್ನಡಿಗ್ರು ಹಾದಿಗೊಂದು ಬೀದಿಗೊಂದು ಕನ್ನಡ ಸಂಘ ಕಟ್ಕೊಂಡ್ ಅವ್ರೆ. ಎಲ್ಲ ಒಟ್ಟಾಗಿ ಅಂತ ರಾಮ್ ಮೂರ್ತಿ, ವಿವೇಕ್, ಮತ್ತೆ ಭಾನುಮತಿ ಅವ್ರು ಹೋದ್ಕಡೆ ಎಲ್ಲಾ ಬೇಡ್ ಕೊಂಡ್ರು. ಆದ್ರೆ ಜನ ಮುಂದಕ್ ಹೋಗಿ ಅಂತಾರೆ! ರಾಮ್ ಮೂರ್ತಿ, ವಿವೇಕ್,  ಮತ್ತೆ ಭಾನುಮತಿ ಅವ್ರು Mission Impossible ಅಂತ ತಲೆಮೇಲೆ ಕೈ ಹೊತ್ಕೊಂಡು ಕುಂತವ್ರೆ. ಸೃಜನ್ ಅಣ್ಣ ನೀವಾದ್ರೂ ವಸಿ ಯು.ಕೆ. ಕನ್ನಡಿಗ್ರ್ನ  ಒಟ್ಟಿಗೆ ಸೇರ್ಸಿ…

ಸೃಜನ್: ಇದು ಬಹಳ ಜವಾಬ್ದಾರಿ ಕೆಲಸ. ಒಂದ್ ಹಾಡಿನ ಮೂಲಕ ಪ್ರಯತ್ನ ಮಾಡ್ ಬಿಡ್ತೀನಿ (ಕಂಠ ಸರಿ ಮಾಡಿಕೊಳ್ಳುತ್ತಾ ಹಾಡು ಶುರು ಮಾಡುತ್ತಾರೆ). “ಕನ್ನಡದ ಮಕ್ಕಳೆಲ್ಲ ಒಂದಾಗಿ ಬನ್ನಿ ತಾಯ್ನಾಡ ಜಯಭೇರಿ ನೀವಾದವೆನ್ನಿ.” (ಎರಡು ನಿಮಿಷ ಹಾಡುತ್ತಾರೆ)

****

ಚಿತ್ರ ಕಲೆ: ಲಕ್ಷ್ಮೀ ನಾರಾಯಣ ಗುಡೂರ
ಚಿತ್ರ ಕಲೆ: ಲಕ್ಷ್ಮೀ ನಾರಾಯಣ ಗುಡೂರ

ದೃಶ್ಯ 3

ಪಾತ್ರಧಾರಿ: ಸೃಜನ್ ಅಣ್ಣ, ನೀವು ಬೆಂಗಳೂರಿನಲ್ಲಿ ಅದೇನೋ ‘ನಿಜ ಟಾಕೀಸ್ ‘ ಅಂತ ನಡಸಿ ತುಂಬಾ ಫೇಮಸ್ ಆಗ್ಬುಟ್ಟು ಈಗ ಸೆಲಿಬ್ರಿಟಿ ಅಂತ ಎಲ್ಲ ಹೇಳ್ತಾವ್ರೆ.

ಸೃಜನ್: ಎ ಬೆಪ್ ತಕಡಿ, ಅದು ‘ಮಜಾ ಟಾಕೀಸ್’ ಕಣೋ!!

ಪಾತ್ರಧಾರಿ: ಅಲ್ಲ ನೀವು ಸಿನ್ಮ ಸೆಟ್ ಹಾಕಿ ಆಡಿಯನ್ಸ್ ಕರಸಿ ಸಿನಮಾ ನಟ ನಟಿಯರನ್ನ ಕರ್ದು ಲೈವ್ ಮ್ಯೂಸಿಕ್ ಬ್ಯಾಂಡ್ ಇಟ್ಮೇಲೆ ಅದು ‘ನಿಜಾ  ಟಾಕೀಸ್’ ಅಲ್ದೆ ಇನ್ನೇನು?

ಸೃಜನ್: ಅಲ್ಲ ನೀ ಹೇಳದೇನೋ ಸರಿ ಇರಬಹದು. ಅಂದ ಹಾಗೆ ‘ನಿಜ’ ಅಂದ್ರೆ ಒಂದು ಅರ್ಥದಲ್ಲಿ ‘Reality’ ಅಂತ. ಮುಂದಕ್ಕೆ ‘ನಿಜಾ ಟಾಕೀಸ್’ ಅಂತ ಒಂದು ‘Reality’ ಷೋ ಮಾಡೋದಕ್ಕೆ ಒಳ್ಳೆ ಐಡಿಯಾ ಕೊಟ್ಟೆ ಕಣೋ, ಭೇಷ್! ನಾನು ಇಂಗ್ಲೆಂಡ್ಗೆ ಬಂದಿದಿಕ್ಕೆ ಒಂದು ಒಳ್ಳೆ ಐಡಿಯಾ ಸಿಕ್ತು ಬಿಡು!!

ಪಾತ್ರಧಾರಿ: ಅಣ್ಣ ನಿಮ್ಮ ಷೋ ನಲ್ಲಿ ಇಂದ್ರಜಿತ್ ಅಂತ ಒಬ್ಬರು ಹೋಸ್ಟ್ ಸೋಫಾ ಮೇಲೆ ಕುಂತ್ಕಂಡು ಮಾತ್ ಮಾತ್ಗೆ ಚಪ್ಪಾಳೆ ತಟ್ಟಿ ನಗ್ತಾರಲ್ಲ ಅವ್ರು ವಾರಾ ವಾರಾ ತಿರುಪತಿಗೆ ಹೋಗ್ತಾರ? ತಲೆ ಯಾಕ್ ಅಂಗೆ ಬೋಳುಸ್ಕಂಡವ್ರೆ?!

ಸೃಜನ್: ಏ ಅವ್ರು ಯಾರ್ ಗೊತ್ತ? ನಮ್ಮ ಕನ್ನಡ ಸಾಹಿತಿ, ಮೇಸ್ಟ್ರು, ಲಂಕೇಶ್ ಪತ್ರಿಕೆಯ ಲಂಕೇಶಪ್ಪ ಅವ್ರ ಮಗ ಕಣೋ. ಅವ್ರು ಅಪ್ಪಂತರ ಒಬ್ಬ ಸೆಲೆಬ್ರಿಟಿ. ಕನ್ನಡದ ಪತ್ರಕರ್ತ ಮತ್ತೆ ಫಿಲಂ ನಿರ್ದೇಶಕರು. ಈಗಿನ್ ಕಾಲ್ದಲ್ಲಿ ಬಾಲ್ಡ್ ಆಗಿರವ್ರು ಗುಂಡ್ ಹೊಡಸ್ಕೊಳದೆ ಫ್ಯಾಷನ್ನು. ಅವ್ರು ಎದ್ರಿಗೆ ಕುಳ್ತಿದ್ರೆ ನಂಗೆ ಕನ್ನಡಿನೆ ಬೇಡ!

ಪಾತ್ರಧಾರಿ: ಅಣ್ಣ ಅವ್ರು ಅವರಪ್ಪನ ಪತ್ರಿಕೆ ನಡೆಸೋದ್ಬಿಟ್ಟು ನಿಮ್ಮ ಷೋ ನಲ್ಲಿ ಯಾಕೆ ಕುಂತ್ಕೊತಾರೆ?

ಸೃಜನ್: ಅವ್ರ ಖುಷಿ! ನಿನಗ್ಯಾಕೋ ಅದು?

ಪಾತ್ರಧಾರಿ: ನಿಮ್ಮ ಟಿ.ವಿ ಷೋದಲ್ಲಿ ಅಪರ್ಣ ಅಂತ ತುಂಬಾ ಚನ್ನಾಗಿ ಕನ್ನಡ ಮಾತ್ ಆಡ್ತಾರಲ್ಲ, ಅವ್ರು ಕನ್ನಡ ಮೇಡಂ ಅ? ಇಂಗ್ಲೆಂಡ್ ಗೆ ಬಂದು ಮಕ್ಕಳಿಗೆ ಕನ್ನಡ ಹೇಳ್ಕೊಡ್ತಾರ? ಯು ಕೆ ಕನ್ನಡ ಬಳಗ್ ದವರು ಇಲ್ಲಿ ‘ಕನ್ನಡ ಕಲಿ’ ಕ್ಲಾಸ್ ಮಾಡ್ತಿವಿ ಅಂತ ಕರ್ನಾಟ್ಕ ಗೊವೆರ್ ಮೆಂಟ್ ಇಂದ ದುಡ್ಡ್ ಇಸ್ಕಂಡ್ ಅವ್ರೆ, ಅವ್ರ್ಗೆ ಒಳ್ಳೆ ಕನ್ನಡ ಮೇಡಂ ಇನ್ನು ಸಿಕ್ಕಿಲ್ಲ?!

ಸೃಜನ್: ಎ ಅವ್ರುನ ಜನ ಮರ್ಯಾದೆ ಇಂದ ‘ಅಪರ್ಣ ಮೇಡಂ’ ಅಂತ ಕರಿತಾರೆ ಅವ್ರು ನಿಜವಾದ ಸ್ಕೂಲ್ ಮೇಡಂ ಅಲ್ವೋ. ಅವ್ರು ಎಲ್ಲಾ ಸಭೆಯಲ್ಲಿ ಚನ್ನಾಗಿ ಕನ್ನಡ ಮಾತಾಡಿ Compere ಮಾಡ್ತಾರೆ. ಮತ್ತೆ ಒಳ್ಳೆ ಸಿನಿಮಾ ಮತ್ತೆ ಟಿವಿ ಆಕ್ಟರ್, ಪ್ರೆಸೆಂಟರ್ ಕಣೋ… In fact ‘one and only’ Aparna, ಕನ್ನಡಿಗರ ಅಪರಂಜಿ!!

ಪಾತ್ರಧಾರಿ: ನಿಮ್ಮ ಷೋದಲ್ಲಿ ‘ಡಿಂಗಿಚಿಕ’ ಅಂತ ಡ್ಯಾನ್ಸ್ ಮಾಡಿ ಬಣ್ಣ ಬಣ್ಣ ಬಟ್ಟೆ ಹಾಕೊಂಡು ಕೂಲಿಂಗ್ ಗ್ಲಾಸ್ ಹಾಕೊಂಡು ಜನನ ನಗಸ್ತರಲ್ಲ, ಅವ್ರು ಸ್ಟೇಜ್ ಮೇಲೆ ಕತ್ಲೆ ಹೊತ್ತಲ್ಲಿ ಅದ್ಯಾಕೆ ಕೂಲಿಂಗ್ ಗ್ಲಾಸ್ ಹಾಕೊಂಡ್ ಅವ್ರೆ. ಇಂಗ್ಲೆಂಡಿಗೆ ಅವ್ರೆನಾದ್ರು ಬಂದ್ರೆ ಪಾಪ ಕುರುಡಾ ಅಂತ ಒಂದು ಕಡ್ಡಿನೋ ಅಥವಾ ಒಂದ್ ಗೈಡ್ ನಾಯಿನೋ ಕೊಡ್ತಾರೆ!!

ಪಾತ್ರಧಾರಿ: ಸೃಜನ್ ಅಣ್ಣ, ನಿಮ್ಮ ‘ಮಜಾ ಟಾಕೀಸ್’ ಬಗ್ಗೆ ನಮ್ಮ ಕನ್ನಡ ಬಳಗದವ್ರ್ಗೆ ಸ್ವಲ್ಪ Detail ಆಗಿ ತಿಳಸ್ತೀರ?

ಸೃಜನ್: ನಾನ್ ಯಾಕ್ ತಿಳಸ್ ಬೇಕು?! ನೀವೆಲ್ಲ ಇಲ್ಲಿ ಟಿ.ವಿ ನಲ್ಲಿ ನೋಡ್ಕಳಿ!

ಪಾತ್ರಧಾರಿ: ಅಣ್ಣ ಇಲ್ಲಿ ಕನ್ನಡ ಚಾನಲ್ ಬರಕ್ಕಿಲ್ಲ, ನಮಗೆಲ್ಲ You tubeನಲ್ಲಿ ಹಳಸಿದ್ದು ಮಾತ್ರ ಸಿಕ್ಕತ್ತೆ. ಇಲ್ಲಿ ತಮಿಳ್ ಚಾನೆಲ್ ಇದೆ, ಹಿಂದಿ ಇದೆ, ಬಂಗಾಳಿ ಇದೆ. ಕನ್ನಡ ಮಾತ್ರ ಇಲ್ಲ. ನಾವು ಕನ್ನಡ ಜನ, ನಮ್ಮ ಭಾಷೆ ಬಗ್ಗೆ ಅಭಿಮಾನ ಕಡಿಮೆ, ನಮಗೆ ಗಲಾಟಿ ಮಾಡಿ ಗೊತ್ತಿಲ್ಲ, ನಾವು ಸಾಧು ಜನಗಳು ನೋಡಿ. ನಮ್ಮ ಕನ್ನಡ ಬಳಗದ ಫಂಕ್ಷನ್ ಗೆ ಬನ್ನಿ ಬನ್ನಿ ಅಂತ ಜನಕ್ಕೆ ಅರಿಶಿನ ಕುಂಕುಮ ಕೊಟ್ಟು ಕರಿಬೇಕು. ಮಾತ್ ಎತ್ತಿದರೆ ಅವರ್ಗೆ ಬಳಗದ  ಫಂಕ್ಷನ್ ನಲ್ಲಿ ಡಿಸ್ಕೌಂಟ್ ಕೊಡಿ ಅಂತ ಕೇಳ್ತಾರೆ. ನಿಮ್ ತರ ಫಿಲಂ ಸ್ಟಾರ್ ಕರ್ಸೋದಿಕ್ಕೆ ಎಷ್ಟು ಕರ್ಚ್ ಆಗುತ್ತೆ ಅಂತ ಯೋಚನೆ ಮಾಡಲ್ಲ. “ಕೊಡೋದು ಮೂರ್ ಕಾಸು, ಕೋಣೆ ತುಂಬಾ ಹಾಸು” ಅಂದ್ರೆ ಹೆಂಗೆ ಸಾಧ್ಯ?

ಸೃಜನ್: ನೀವೆಲ್ಲ ಏನು ಬೇಜಾರ್ ಮಾಡ್ಕೋಬೇಡಿ. ಹೀಗೆ ಕನ್ನಡಕ್ಕೆ ಅಂತ ಒಳ್ಳೆ ಕೆಲಸ ಮಾಡಿ, ಎಲ್ಲ ಒಂದಾಗಿ ಕನ್ನಡ ಉಳಿಸಿ ಬೆಳಸಿ. ನಾನು ನಮ್ಮ ಕಲರ್ಸ್ TV ಮತ್ತೆ ಬೇರೆ ಬೇರೆ ಚಾನಲ್ ಗಳ್ಗೆ ಶಿಫಾರಸ್ ಮಾಡ್ತೀನಿ. ನೀವೆಲ್ಲ ಮುಂದೆ ಮಜಾ ಟಾಕೀಸ್ ಲೈವ್ ಪ್ರೊಗ್ರಾಮ್ ನೋಡಬಹುದು. ಸರಿ, ನಾನು ವಾಪಸ್ ಬೆಂಗಳೂರಿಗೆ  ಹೊರಡಬೇಕು. ಯು ಕೆ ಕನ್ನಡಿಗರು ನಮ್ಮ ಷೋಗೆ ಬರಬೇಕು. ಅದಕ್ಕೆ ವ್ಯವಸ್ಥೆ ಮಾಡ್ತೀನಿ.

A day without laughter is a day wasted!

ಬರ್ತೀನಿ ನಮಸ್ಕಾರ.

  ***