ಮಾರ್ಬಲ್ ಆರ್ಚ್ ಕೇವ್ಸ್

ಅಮಿತಾ ರವಿಕಿರಣ್ 

 ಮನುಷ್ಯನ ತಣಿಯದ ಕುತೂಹಲ ಅದೆಷ್ಟೋ ಆವಿಷ್ಕಾರಗಳಿಗೆ ಕಾರಣ ವಾಗಿದೆ, ಮಾನವನ ಪ್ರತಿ ಹೊಸ ಹುಡುಕಾಟದ ಅಂತ್ಯದಲ್ಲಿ ನಿಸರ್ಗ ಮತ್ತೊಂದು ಒಗಟನ್ನು ಬಿಸಾಕಿ ನಗುತ್ತ ನಿಲ್ಲುತ್ತದೆ. ಮಾನವ ಮತ್ತೆ ಹುಡುಕುತ್ತಾನೆ ಹುಡುಕುತ್ತಲೇ ಇರುತ್ತಾನೆ.  ನಿಸರ್ಗದ ಚಲುವು ಮತ್ತು ಮಾನವನ ಕೌಶಲ್ಯ ಎರಡೂ ಜೊತೆಗೆ ನಿಂತು ಮಾತನಾಡುವುದು ಅಪರೂಪಕ್ಕೆ ಕಾಣಸಿಗುವ ದೃಶ್ಯ. ಅಂಥದ್ದೊಂದ್ದು ನಿಸರ್ಗದ ವಿಸ್ಮಯ ಮತ್ತು ಮಾನವನು ಅತಿ ಜತನದಿಂದ ಅದರ ಮೂಲರೂಪಕ್ಕೆ ಧಕ್ಕೆ ಬಾರದಂತೆ ಕಾದುಕೊಂಡಿರುವ ಅಪರೂಪದ ಸ್ಥಳವೇ  ನಾರ್ದರ್ನ್ ಐರ್ಲ್ಯಾಂಡಿನಲ್ಲಿರುವ 'ಮಾರ್ಬಲ್ ಆರ್ಚ್ ಕೇವ್ಸ್'.  

 ಭೂಮಿಯ ಮೇಲ್ಪದರಿನಲ್ಲಿ ರೂಪುಕೊಳ್ಳುವ ಅನೇಕ ರೀತಿಯ ಗುಹೆಗಳನ್ನು ತಜ್ಞರು ಗುರುತಿಸುತ್ತಾರೆ ಮತ್ತು ಅವುಗಳು ರೂಪುಗೊಂಡಿರುವ ರೀತಿ, ವಿನ್ಯಾಸ, ಲಕ್ಷಣಗಳನ್ನ ಗಮನಿಸಿ ಈ ಗುಹೆಗಳನ್ನು ಈ ೫ ಪ್ರಕಾರವಾಗಿ  ವಿಂಗಡಿಸುತ್ತಾರೆ ಅವುಗಳಲ್ಲಿ ಕೆಲವು ಇಲ್ಲಿವೆ .
೧. ಸೊಲ್ಯುಶನ್ ಕೇವ್ಸ್(Solution caves)
ಸುಣ್ಣದ ಕಲ್ಲು ಮತ್ತು ನೀರಿನ ನಿರಂತರ ಸಹಚರ್ಯ ರೂಪಿಸುವ ಗುಹೆಗಳು. 

೨.ವೋಲ್ಕಾ ಕೇವ್ಸ್( volcanic caves) 
ಭೂಮಿಯೊಳಗಿಂದ ಉಕ್ಕುವ ಲಾವಾ , ಜ್ವಾಲಾಮುಖಿಗಳು ತಣಿದು ಹೋದಮೇಲೆ ಉಂಟಾದ ಗುಹೆಗಳು. ಹವಾಯಿಯನ್ ದ್ವೀಪದಲ್ಲಿ ಇರುವ Kazumara caves ಸುಮಾರು ೪೬ಮೈಲು ಗಳಷ್ಟು ಉದ್ದದ ಗುಹೆ ಆಗಿದ್ದು  ಜಗತ್ತಿನಲ್ಲಿ ಅತ್ಯಂತ ದೊಡ್ಡ ಜ್ವಾಲಾಮುಖಿ ಗುಹೆ ಎಂದು ಹೆಸರಾಗಿದೆ.   

೩.ತಲಸ್ ಕೇವ್ಸ್ (Talus caves)
ಎತ್ತರ ಪರ್ವತ ಪ್ರದೇಶದಿಂದ ನೈಸರ್ಗಿಕ ವೈಪರಿತ್ಯ ಗಳಿಂದ  ಕಲ್ಲುಗಳು ಉರುಳಿ ಪರ್ವತದ ಕೆಳಭಾಗದಲ್ಲಿ ಉಂಟುಮಾಡುವ ಗುಹೆಗಳು.

೪.ಸೀ ಕೇವ್ಸ್ (Sea caves) 
ಸಮುದ್ರದ ನೀರು ಮತ್ತು ದಡ ದಲ್ಲಿರುವ ಕಲ್ಲುಬಂಡೆಗಳ ಘರ್ಷಣೆ ಮತ್ತು ಮರಳು ತೆರೆಯೊಂದಿಗೆ ಸ್ಥಳಾಂತರ ಗೊಳ್ಳುವಾಗ ಉಂಟಾಗುವ ಗುಹೆಗಳು. ಇಂಥಹ ಹಲವು ಗುಹೆಗಳನ್ನು ನಾವು ಯುಕೆ, ಫ್ರಾನ್ಸ, ಅಮೇರಿಕ ಮತ್ತು  ಹವಾಯಿಯನ್ ದ್ವೀಪಗಳಲ್ಲಿ ನೋಡಬಹುದು. 

೫ ಗ್ಲೇಸಿಯರ್  ಕೇವ್ಸ್ (Glacier caves)
ಗ್ಲೇಸಿಯರ್ ಹಿಮಬಂಡೆ ಗಳಿಂದ ಉಂಟಾಗುವ ಗುಹೆ , ಕಾಣಲು ಮಂಜಿನ ಮಹಲಿನಂತೆ ಕಂಡರೂ ವಾಸ್ತವದಲ್ಲಿ ಇದು ಸಶಕ್ತ ಗುಹೆಯಾಗಿರುತ್ತದೆ . ಇಂಥ ಗ್ಲೇಸಿಯರ್ ಹಿಮದ ನಡುವೆಯೇ ೪೦೦ ವರ್ಷಗಳ ಕಾಲ ನಮ್ಮ ಕೇದಾರನಾಥ್ ದೇವಸ್ತಾನ ಧ್ಯಾನ ಮಾಡುತಿತ್ತು  ಎಂಬುದು ತಜ್ಞರ ಅಂಬೋಣ. ಗ್ಲೇಸಿಯರ್ ಗುಹೆಗಳಿಂದಾಗಿ  ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿರುವ ಇನ್ನೊಂದು ದೇಶ Iceland 

ಮಾರ್ಬಲ್ ಆರ್ಚ್ ಕೇವ್ಸ್
ಉತ್ತರ ಐರ್ಲೆಂಡಿನ ಫರ್ಮಾನಾ ಕೌಂಟಿ ವ್ಯಾಪ್ತಿಯಲ್ಲಿ ಬರುವ ಮಾರ್ಬಲ್ ಆರ್ಚ್ ಕೇವ ಸಂಶೋಧಿಸಿದ್ದು ಫ್ರಾನ್ಸ್ ನ ಸ್ಪೆಲಿಯೋಲೋಜಿಸ್ಟ್ (speleology-study of caves and other karts) ಎಡ್ವರ್ಡ್ ಅಲ್ಫ್ರೆಡ್ ಮಾರ್ಟೆಲ್, ೧೮೯೫ರಲ್ಲಿ ಈತ ಮತ್ತು ಡಬ್ಲಿನ್ ವಾಸಿ ನಿಸರ್ಗ ತಜ್ಞ ಜೆಮೀ ಒಂದು ಕ್ಯಾನ್ವಾಸ್ ಬೋಟಿನಲ್ಲಿ ಆರಂಭ ದ್ವಾರದಿಂದ ಸುಮಾರು ೩೦೦ ಮೀಟರ್ ದೂರದ ಗುಹೆಯ ಮಾರ್ಗ ಕ್ರಮಿಸಿ ನಕ್ಷೆ ಮಾಡಿ ಇಟ್ಟರು. ನಂತರ ಕ್ರಮವಾಗಿ ಹಲವು ಆಸಕ್ತರು ಸೇರಿ ಸುಮಾರು ೪. ೫ ಕಿಲೋಮೀಟರ್ ಗಳಷ್ಟು ಉದ್ದದ ಈ ಗುಹೆಯನ್ನು ಎಲ್ಲರ ಗಮನಕ್ಕೆ ತಂದರು.  

ಮಾರ್ಬಲ್ ಆರ್ಚ್ ಕೇವ ಸುಣ್ಣದ ಕಲ್ಲುಗಳಿಂದ ಉಂಟಾದ ಗುಹೆ . ಈ ಗುಹೆಯ ಒಳಗೆ ಕ್ಲಾಡಾ ಮತ್ತು  ಒವೆನಬ್ರೀನ್  ಹೆಸರಿನ ನದಿಗಳ ಸಂಗಮವಾಗುತ್ತದೆ, ಮತ್ತು ಇಲ್ಲಿ ಉಂಟಾಗಿರುವ ಭೌಗೊಲಿಕ  ಬದಲಾವಣೆಗಳು ,ಕಲ್ಲು ಗಳ ಮೇಲಿನ ವಿನ್ಯಾಸಗಳು ಮಿಲಿಯನ  ವರ್ಷಗಳ ಕಾಲ ನದಿಗಳ ಏರಿಳಿತ ಮತ್ತು ಹರಿಯುವಿಕೆಯ ಪರಿಣಾಮಗಳೇ ಆಗಿವೆ. 

೨೦೦೮ರಲ್ಲಿ ಯುನೆಸ್ಕೋ  ಈ ಪ್ರದೇಶವನ್ನು 'ಗ್ಲೋಬಲ್ ಜಿಯೋ ಪಾರ್ಕ್' ಎಂದು ಘೋಷಿಸಿತು. ೧೯ನೇ  ಶತಮಾನದಿಂದಲೇ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದು ಆಗಿದ್ದ ಈ ಸ್ಥಳ ೨೦೦೮ ರ ನಂತರ ಯೂರೋಪಿನ ಮುಖ್ಯ ಪ್ರವಾಸಿ ಸ್ಥಳಗಳ ಪಟ್ಟಿಯಲ್ಲಿ ಬಂದಿತು.
ಐರ್ಲ್ಯಾಂಡ್ ಗೆ ಭೇಟಿ ಕೊಟ್ಟವರು ಇದನ್ನು ನೋಡದೆ ಮರಳಿದರೆ ಅವರ ಪ್ರವಾಸ ಅಪೂರ್ಣ ಎಂದೇ ಅರ್ಥ. 

ಸಾಂಪ್ರದಾಯಿಕ  ದ್ವಾರ ಹೊಕ್ಕಿದ ನಂತರ ೧೫೦ ಮೆಟ್ಟಿಲು ಮತ್ತು ಒಂದೂವರೆ ತಾಸಿನ ನಿರಂತರ ನಡಿಗೆ ,  ಗುಹೆಯೊಳಗೆ ಹರಿಯುವ ನದಿಯಲ್ಲಿ ೫ ನಿಮಿಷದ ದೋಣಿಯಾನ, ದೋಣಿಯಲ್ಲಿ ಕುಳಿತಾಗ ಕಲ್ಲಿನ ಕಮಾನುಗಳಿಂದ ಒಸರುವ ನೀರ ಒರತೆ , ಕಡಿದಾದ ಭಾಗದಲ್ಲಿ ನಡೆಯುತ್ತಿರುವಾಗ ಪಟ್ಟನೆ ಎದುರಾಗುವ ಬಂಡೆಗಳು. ಅದೇನೇನೋ ವಿನ್ಯಾಸಗಳು ಅಲ್ಲೇಲ್ಲೊ ಹಿಮ ತುಂಬಿ ಕೊಂಡಂತೆ , ಮತ್ತೊಂದೆಡೆ ಹೂಕೋಸು ಅರಳಿದಂತೆ, ಒಮ್ಮೆ ಆಕಳ ಕೆಚ್ಚಲು, ಮತ್ತೊಮ್ಮೆ ಪುಟ್ಟ ಕುಟೀರ, ಅದೋ ಆ ಕಲ್ಲು ಆಕಳ ಕಿವಿಯಂತಿದೆ ಅಂದು ಕೊಂಡು ಈಚೆ ತಿರುಗಿದರೆ ಭಯಂಕರ ರಾಕ್ಷಸ ಬಾಯಿ ತೆರೆದು ನಿಂತಂತೆ!  ಅದು ಭೂಮಿಯ ಒಳ ಪದರ ಅಮ್ಮನ ಮಡಿಲಿನಂತೆ ತಂಪು ತಂಪು. ನೆಲ ಕಾಣುವ ನೀರು ಹಿತ ನೀಡಿದರೆ ಕೆಲವೊಂದೆಡೆ  ಕಪ್ಪಗಿನ ಕಂದಕ ಭಯ ಹುಟ್ಟಿಸುತ್ತವೆ ಸಧ್ಯಕ್ಕೆ ಈ ಗುಹೆಯ ೧ ಭಾಗ ಮಾತ್ರ ಪ್ರವಾಸಿಗರು ನೋಡಬಹುದು ಉಳಿದ ೩ ಭಾಗದಲ್ಲಿ ನೀರು ತುಂಬಿಕೊಂಡಿದೆ. ಚಳಿಗಾಲದಲ್ಲಿ ಈ ಸ್ಥಳ ಪೂರ್ತಿಯಾಗಿ ಮುಚ್ಚಿರುತ್ತದೆ, ಜೊತೆಗೆ ತಾಪಮಾನ ಮತ್ತು ಏರಿಳಿತದ ದಾರಿಯ ಕಾರಣದಿಂದ ಉಸಿರಾಟದ ತೊಂದರೆ ಇರುವವರಿಗೆ ಈ ಗುಹೆಯಾ ಓಡಾಟ ಅಷ್ಟು ಸೂಕ್ತವಲ್ಲ ಎನ್ನುವುದು ಟಿಕೆಟ್ ಕೌಂಟರಿನಲ್ಲಿ ಕೊಟ್ಟ ಸೂಚನೆಯಾಗಿತ್ತು. ಪುಟ್ಟ ಮಕ್ಕಳನ್ನು ಎತ್ತಿಕೊಂಡಾಗಲಿ, ಪ್ರಾಮ್ ಮೇಲೆ ಆಗಲಿ ಈ ಗುಹೆಯಲ್ಲಿ ಓಡಾಡುವುದು ಕಷ್ಟ. 

ಮೊದಲ ಸಲ ನಾವು ಸ್ನೇಹಿತರೊಂದಿಗೆ ಇಲ್ಲಿಗೆ ಹೋದಾಗ, ನಗುವೆಂದರೇನು ಎಂಬುದರ ಪರಿಚಯವೇ ಇಲ್ಲದ ನಮ್ಮ ಗೈಡ್ ನಮ್ಮ ಟ್ರಿಪ್ಪಿನ ಮತ್ತೊಂದು ಆಕರ್ಷಣೆ ಆಗಿದ್ದ. ಭತ್ತ ಹಾಕಿದರೆ ಅರಳಾಗಿ ಬರುವಷ್ಟು ಸಿಡುಕನಾಗಿದ್ದ.  ಪ್ರಯಾಣದಲ್ಲಿ ಮೆಟ್ಟಿಲುಗಳನ್ನು ಕಂಡ ಕೂಡಲೇ ನನಗೆ ಆಗುತ್ತಿದ್ದ ತಳಮಳ !! ಒಂದೂವರೆ ತಾಸಿನ ಈ ಪಯಣದ ನಂತರ ಹಸಿವಿನಿಂದ ಹೈರಾಣಾಗಿ ಬಂದಾಗ ಮನೆಯಿಂದಲೇ ಮಾಡಿ ತಂದ ಬಿಸಿಬೇಳೆ ಭಾತ್ ಮತ್ತು ಸ್ಯಾಂಡ್ವಿಚ್ ನಮ್ಮ ಪಾಲಿಗೆ ಎಂದಿಗಿಂತ ರುಚಿಯಾಗಿದ್ದವು. ಟಿಕೆಟ್ ಕೌಂಟರ್ ಮತ್ತು ಸ್ವಾಗತ ಕಚೇರಿಯ ಜೊತೆಗೆ ಇಲ್ಲೊಂದು ಕೆಫೆಯೂ ಇದೆ. ಅವರು ಮಾಡಿಕೊಡುವ   
ವೆನಿಲ್ಲಾ ಐಸ್ಕ್ರೀಂ ಮತ್ತು ಬಿಸಿ ಬಿಸಿ ಬ್ರೌನಿ ಸವಿಯದಿದ್ದರೆ  ನಮ್ಮ ಪ್ರವಾಸದಲ್ಲಿ ಏನೋ ತಪ್ಪಿ ಹೋದಂತೆ ಅನಿಸುತ್ತದೆ. ಇವನ್ನು ಹೇಳಲೇಬೇಕು ಎನಿಸಿತು ಏಕೆಂದರೆ ಇದೆಲ್ಲ ಆಗಿದ್ದು ನಮ್ಮ ಈ ಗುಹೆಗಳಿಗೆ ಮೊದಲಬಾರಿ ಭೇಟಿ ಕೊಟ್ಟಾಗ. ಆ ನಂತರ ಅದೆಷ್ಟು ಸಲ ಹೋಗಿ ಬಂದಿದ್ದರೂ ಮತ್ತೆ ಮತ್ತೆ ಹೋಗಿ ಬರಬೇಕು ಎನ್ನುವಂತಹ ಜಾಗ ಇದು. 

ಮಾರ್ಬಲ್ ಆರ್ಚ್ ಕೇವ್ಸ್ ಬೆಲ್ಫಾಸ್ಟ್ ನಗರದಿಂದ ೯೧ಮೈಲಿ ದೂರದಲ್ಲಿದೆ. ಹತ್ತಿರದ Enniskillen, Florence court, ಮತ್ತು ಹಲವು ದ್ವೀಪಗಳನ್ನೂ, ಫರ್ಮಾನಾ ಊರಿನ ಹತ್ತಿರ ಇರುವ ಚಂದದ ಜಲಪಾತಗಳನ್ನೂ ನೋಡಬಹುದು. ಇಲ್ಲಿ ಅಕ್ಕ ಪಕ್ಕದ ಹಳ್ಳಿಗಳಲ್ಲಿ  ಒಳ್ಳೆಯ cottage ವಸತಿ ಸೌಲಭ್ಯ ಲಭ್ಯವಿದೆ. ನೀವು ಮೊದಲೇ ಈ ಗುಹೆಯ ಸ್ವಾಗತ ಕಚೇರಿಗೆ ಕರೆ ಮಾಡಿ opening hours ಬಗ್ಗೆ ಪಕ್ಕ ಮಾಹಿತಿ ಪಡೆದು ಹೋಗುವುದು ಒಳ್ಳೆಯದು. ಜೋರಾಗಿ ಮಳೆ ಗಾಳಿ ಇದ್ದ ಹೊತ್ತಲ್ಲಿ ಇದನ್ನು ಯಾವುದೇ ಮೂನ್ಸೂಚನೆ ಇಲ್ಲದೆಯೂ ಮುಚ್ಚಲಾಗುತ್ತದೆ. ಈ ನಿರಾಸೆ ನಮಗೂ ಒಮ್ಮೆ ಆಗಿದ್ದಕ್ಕೆ ಮೊದಲೇ ಪೂರ್ಣ ಮಾಹಿತಿ ತೆಗೆದುಕೊಂಡು ಹೋಗುವುದು ಒಳಿತು.   

ಅಲ್ಲಿ ನಾನು ಫೋಟೋ ಕ್ಲಿಕ್ಕಿಸಲು ಪರದಾಡಿದ್ದು ಮತ್ತೊಂದು ಕತೆ , ನನ್ನ ಕಣ್ಣಿಗೆ ಕಂಡಷ್ಟು ನನ್ನ ಕ್ಯಾಮರಾ ಕಣ್ಣಿಗೆ ಕಾಣಲಿಲ್ಲ. ಅದಕ್ಕೆ ಅಂತರ್ಜಾಲದಲ್ಲಿ ಸಿಕ್ಕ ಚಿತ್ರಗಳನ್ನೇ ಇಲ್ಲಿ ಹಾಕುತ್ತಿದ್ದೇನೆ. 
ನೀವು ಬೆಲ್ಫಾಸ್ಟ್ ಅಥವಾ ಐರ್ಲೆಂಡ್ ಗೆ ಭೇಟಿ ಕೊಟ್ಟರೆ ಮಾರ್ಬಲ್ ಆರ್ಚ್ ಕೇವ್ಸ್ ಗೆ ಮರೆಯದೆ ಭೇಟಿ ಕೊಡಿ. 
Photo credits: The Fermanagh Herald and Wikipedia 

ಇನ್ನು ಯಾಕ ಬರಲಿಲ್ಲವ್ವ…

-ಅಮಿತಾ ರವಿಕಿರಣ್ 
ಅನಿವಾಸಿಗಳಾದ ನಮಗೆ ನಮ್ಮ ಜನ್ಮಭೂಮಿ ಭೇಟಿ ಮಾಡುವ ಅವಕಾಶ ಒದಗಿ, ಒಂದಷ್ಟು ದಿನ ತಾಯಿನೆಲದ ಗಾಳಿ ಬೆಳಕಿನಲ್ಲಿ ನಾವು ತೋಯ್ದು ಬರುವ ಗಳಿಗೆಗಳು ಒದಗಿ ಬಂದಾಗ ವ್ಯಕ್ತಪಡಿಸಲಾಗದ ಒಂದು ಖುಷಿ ಮನಸ್ಸನ್ನು ಆವರಿಸಿಕೊಳ್ಳುತ್ತದೆ. ಅದಕ್ಕೆ ನಾನು ಕೂಡ  ಹೊರತಲ್ಲ. ನಾನು ಈ ಬಾರಿ ಭಾರತಕ್ಕೆ ಭೇಟಿ ಕೊಟ್ಟಿದ್ದು ನಾಲ್ಕು ವರ್ಷ ಒಂಬತ್ತು ತಿಂಗಳುಗಳ ಧೀರ್ಘ ಅಂತರದ ನಂತರ. ಯುಕೆ ಗೆ ಬಂದ ನಂತರ ನಾನು ಭಾರತಕ್ಕೆ ಹೋಗಿದ್ದು ಮೂರೇ ಬಾರಿ ಹೋದಾಗಲೆಲ್ಲ ಕೆಲವು ಜವಾಬ್ದಾರಿಗಳನ್ನು ಹೊತ್ತುಕೊಂಡೇ ಹೋಗಿದ್ದೆ, ತಂಗಿ ಮದುವೆ, ಮಗನ ಉಪನಯನ, ಪುಟ್ಟ ಮಗಳನ್ನು ಎತ್ತಿಕೊಂಡು ಹೀಗೆ ಏನಾದರೊಂದು ಕಾರಣಗಳಿಂದ ನನಗೆ ಬೇಕಾದೆಡೆ ಬೇಕಾದಂತೆ ನನ್ನ ರಜಾ ಕಾಲವನ್ನು ಕಳೆಯುವುದು ಸಾಧ್ಯವಾಗಿರಲಿಲ್ಲ. ಜೊತೆಗೆ ಅದು ಅಗತ್ಯ ಅಂತ ಕೂಡ ಅನಿಸಿರಲಿಲ್ಲ. ಹೋದಾಗಲೆಲ್ಲ ಅಮ್ಮನ ಕಯ್ಯಡಿಗೆ ತಿಂದು. ಅತ್ತೆಮನೆಗೆ ಹೋದಾಗ ಏಕಮೇವ ಸೊಸೆಯಾದ ಕಾರಣ ಅವರ ಇಚ್ಛೆ, ಬಯಕೆಗಳಂತೆ  ಸುತ್ತಮುತ್ತಲಿನ ದೇವಸ್ಥಾನ ಸುತ್ತಿ ,ಸಂಬಂಧಿಕರ ಮನೆಗೆ ಹೋಗಿ ಅವಕಾಶ ಆದರೆ  ಯಾವುದೋ ಒಂದೆರಡು ಪೂಜೆಯಲ್ಲಿ ಆರತಿ ಹಾಡು ಹೇಳಿದರೆ  ನನ್ನ ಭಾರತ ಪ್ರಯಾಣ ಮುಗಿದಿರುತ್ತಿತ್ತು. ಇದಕ್ಕಿಂತ ಭಿನ್ನವಾಗಿ ನಾನು ಕೂಡ ಎಂದೂ ಯೋಚಿಸಿಯೂ ಇರಲಿಲ್ಲ.
ಆದರೆ ಈ ಬಾರಿ ಭಾರತ ಭೇಟಿ ನನ್ನ ಪಾಲಿಗೆ ಅತೀ ವಿಶೇಷ, ಕೋವಿಡ್,lockdown ಅಂತೆಲ್ಲ ಎರಡುಬಾರಿ ನನ್ನ ವಿಮಾನ ರದ್ದಾಗಿತ್ತು,ಮಕ್ಕಳ ಶಾಲೆ ,ಪತಿಯ ಉದ್ಯೋಗ ,ಇದೆಲ್ಲ ನನ್ನ ಮನಸಿಗೆ ಬಂದಾಗ ಟ್ರಿಪ್ ಪ್ಲಾನ್ ಮಾಡಲು ಸಹಕಾರಿಯಾಗಿರಲಿಲ್ಲ. ಹೀಗಾಗಿ ನಾಲ್ಕು ವರ್ಷ ಒಂಬತ್ತು ತಿಂಗಳ ನಂತರ ನಾನು ತಾಯ್ನೆಲವನ್ನು ನೋಡಲಿದ್ದೆ , ತನ್ನ ಪರಿವಾರ ಕುಟುಂಬವನ್ನು ಭೇಟಿಯಾಗಲಿದ್ದೆ. ಗೋವಿನ ಹಾಡು ಪೂರ್ಣ ಪಾಠವನ್ನ ರೆಕಾರ್ಡ್ ಮಾಡಬೇಕೆನ್ನುವ ಪೂರ್ವ ನಿಯೋಜನೆ ಬಿಟ್ಟರೆ ನಾನು ಬೇರೆ ಯಾವುದೇ ಪ್ಲಾನ್ಗಳನ್ನು ಮಾಡದೆ ಸುಮ್ಮನೆ ಹೋಗಿದ್ದೆ. ಸಮಷ್ಟಿ ತನ್ನಷ್ಟಕ್ಕೆ ತಾನೇ ನನ್ನ ೫೦ ದಿನಗಳನ್ನು ಅತ್ಯಂತ ಸುಂದರವಾಗಿ  ಯೋಜಿಸಿ ಕೊಟ್ಟಿತ್ತು . ನಾನು ಖುಷಿಯನ್ನ ಆಸ್ವಾಧಿಸಲೋ ಸಮಷ್ಟಿಗೆ ಧನ್ಯವಾದ ಹೇಳಲೋ ತಿಳಿಯದಾಗಿತ್ತು . ಸಿಕ್ಕ ಗಳಿಗೆಗಳನ್ನು ನನ್ನ ಪುಟ್ಟ ಕ್ಯಾಮರಾದಲ್ಲಿ ಫ್ರೀಜ್ ಮಾಡಿ ಇಡುವುದೊಂದೇ ನನಗಿದ್ದ ಆಯ್ಕೆ ಎಷ್ಟೋ ಬಾರಿ ಅದು ಕೂಡ ಆಗಲಿಲ್ಲ. ಅನಿವಾಸಿ ಗುಂಪು ನನ್ನ ಮಟ್ಟಿಗೆ ನನ್ನ ಯುಕೆಯ ತವರುಮನಿ ಇದ್ದಂತೆ, ನನ್ನ ಪುಟ್ಟ ಪುಟ್ಟ ಪ್ರಯತ್ನಗಳನ್ನು ಶ್ಲಾಘಿಸಿ ಮತ್ತಷ್ಟು ಸಾಧನೆಗೆ, ಓದಿಗೆ ಹಚ್ಚುವ ನನ್ನ ಅತ್ಯಾಪ್ತ ಬಳಗ, ನಿಮ್ಮೆಲ್ಲರೊಂದಿಗೆ ನನ್ನ ಭಾರತ ಭೇಟಿಯ ಅತ್ಯಂತ ಖುಷಿಯ ಕೆಲ ತಾಸುಗಳ ಅನುಭವ ಹಂಚಿಕೊಳ್ಳುವ ಇಚ್ಛೆ ನನ್ನದು. 

ಊರಿಗೆ ಹೋದರೆ ಧಾರವಾಡಕ್ಕೆ ಹೋಗದಿದ್ದರೆ ನನ್ನ ಪ್ರವಾಸವೇ ಅಪೂರ್ಣ,ನನ್ನ ಊರಿಂದ ಧಾರವಾಡ ೭೦ಕಿಲೋಮೀಟರ ದೂರ, ಹೀಗೆ ಮನಸು ಬಂದಾಗಲೆಲ್ಲ ಹೋಗಿ ಬರಬಹುದು.ಮತ್ತು ಧಾರವಾಡ್ ಹೋಗಲು ಯಾವುದೇ ಕಾರಣ ನೆವಗಳು,ಬೇಡ ಇದೊಂದು ರೀತಿ ಮನಸು ಬಂದಾಗ ಗುಡಿಗೆ ಹೋಗುತ್ತೀವಲ್ಲ ಹಾಗೆ. ಆದರೆ ಈ ಸಲದ ಮೊದಲ ಧಾರವಾಡದ ಭೇಟಿ ಸಾಧ್ಯ ಆಗಿದ್ದು  ಪ್ರಜಾವಾಣಿಯ ೭೫ನೇ ವರ್ಷದ ಸಂಭ್ರಮಾಚರಣೆಯ ನಿಮಿತ್ತ ಏರ್ಪಡಿಸಿದ್ದ ಒಂದು ಚಂದದ ಕವಿಗೋಷ್ಠಿ, ಮತ್ತು ಸಂಗೀತ ವಿದ್ಯಾಲಯದ ಮಕ್ಕಳಿಂದ ವಿಶೇಷ ಗಾಯನ ಕಾರ್ಯಕ್ರಮ ಜೊತೆಗೆ ನನ್ನ ಗಾಯನ ಕಾರ್ಯಕ್ರಮವನ್ನೂ ಆಯೋಜಿಸಿದ್ದರಿಂದ. 

ಆನಂದಕಂದರು ಬರೆದ 'ನಲ್ವಾಡಗಳು' ಕವನ ಸಂಕಲನವನ್ನು ಕೆಲವರ್ಷಗಳಿಂದ ಹುಡುಕುತ್ತಿದ್ದೆ, ಎಲ್ಲಿ ಪ್ರಯತ್ನಿಸಿದರೂ ಸಿಗಲಿಲ್ಲ. ಫೇಸಬುಕ್ ನಿಂದ ಪರಿಚಿತರಾದ ರಾಜ್ ಕುಮಾರ್ ಮಡಿವಾಳರ್ ಅವರಿಗೆ ಬೆಲ್ಫಾಸ್ಟ್ ನಲ್ಲಿ ಇರುವಾಗಲೇ ಒಂದು ಮೆಸೇಜ್ ಮಾಡಿ ಕೇಳಿದ್ದೆ ನಿಮ್ಮಲ್ಲಿ ಅಪ್ಪಿತಪ್ಪಿ ನಲ್ವಾಡುಗಳು ಸಂಕಲನ ಇದ್ದರೇ ಅದರದೊಂದು copy ಸಿಗಬಹುದೇ ? ಎಂದು. ಬಂದಾಗ ಬರ್ರಿ ಐತಿ ಕೊಡ್ತೀನಿ ಅಂದ್ರು.
ಸಪ್ತಾಪುರದಲ್ಲಿ ಇರುವ ಅವರ ಅಂಗಡಿಗೆ ಹೋಗಿ ಪುಸ್ತಕ collect ಮಾಡಲು ಹೋದವಳು ಅವರು ಹೇಳುವ ಸಾಹಿತ್ಯ ಲೋಕದ ಚಂದದ ಕಥೆಗಳನ್ನ ಕೇಳುತ್ತ,ಹಾಡುಗಳ ಬಗ್ಗೆ ಮಾತಾಡುತ್ತ ಸಮಯ ಹೋದದ್ದೇ ಗೊತ್ತಾಗಲಿಲ್ಲ. ಅವರಿಗೆ ಎಂದು ತಂದುಕೊಂಡಿದ್ದ ಬುತ್ತಿಯಲ್ಲಿ ನನಗೊಂದು ಪಾಲು ಕೊಟ್ಟು ಅವರ ಶ್ರೀಮತಿ ಸುಮಾ ಮತ್ತು ರಾಜ್ಕುಮಾರ್ ಅವರು ನನ್ನ ಜೀವ ಬಂಧುಗಳೇ ಆಗಿದ್ದರು. 
ಇನ್ನೇನು ಹೊರಡಬೇಕು ಅನ್ನುವಾಗ 'ಇಲ್ಲೇ ಹಳ್ಳಿಯೊಳಗ ಒಂದು ಕನ್ನಡ ಸಾಲಿ ಐತ್ರಿ ನಿಮಗ ಆಗತದ ಅಂದ್ರ ಒಂದೈದು ನಿಮಿಷ ಹೋಗಿ ಬರೋಣ,?' ಅಂದ್ರು ನನಗೆ ಇಲ್ಲ ಅನ್ನುವ ಮನಸು ಇಚ್ಛೆ ಎರಡು ಇರಲಿಲ್ಲ. ಅವರ ಕಾಕಾನ ಕಾರಿನಲ್ಲಿ ನಾನು ಹೊರಟಿದ್ದು ಧಾರವಾಡ ಹತ್ತಿರದ ಹಳ್ಳಿ ಮುಗಧ ಕ್ಕೆ. ಹೆಸರಿನಷ್ಟೇ ಚಂದ ಊರು ಅದು. 'ಬೇಂದ್ರೆಯವರು ಮೇಘದೂತ ಬರೆಯಲು ಶುರು ಮಾಡಿದ್ದು ಇದೆ ಊರಿನ ದೇವಿ ಗುಡಿಯ ಕಟ್ಟಿ ಮ್ಯಾಲೆ' ಅನ್ನುವ ಮಾತು ಕೇಳುತ್ತಲೇ ನನಗೆ ಮಾತೆ ಹೊರಡಲಿಲ್ಲ .ಒಂದುರೀತಿಯ ಖುಷಿಯ ಗುಂಗು. 
 
ಮುಗದದ  ಶಾಲೆಯ ಅತೀ ಉತ್ಸಾಹಿ ,ಸಾಹಿತ್ಯಪ್ರೇಮಿ ಶಿಕ್ಷಕರು ನನ್ನನು ೧೦ ನೇ ತರಗತಿಯ ಮಕ್ಕಳೊಂದಿಗೆ ಮಾತಾಡಲು ತರಗತಿಗೆ ಕರೆದುಕೊಂಡು ಹೋದರು, ಮಕ್ಕಳು ಬೇಂದ್ರೆಯವರ ಎರಡು ಗೀತೆಗಳನ್ನು ಚಂದದ ರಾಗದಲ್ಲಿ ಹಾಡಿದರು. ಹಕ್ಕ್ಕಿಹಾರುತಿದೆ ನೋಡಿದಿರಾ? ಎಂಬ ಗೀತೆ ಕೇಳಿದ್ದ ನನಗೆ, ಮಕ್ಕಳು ಆ ಗೀತೆಯ ಹಿಂದೆಯೇ  ಬೆಕ್ಕು ಹಾರುತಿದೆ ನೋಡಿದಿರಾ ಅಂತೇ ಅದೇ ರಾಗದಲ್ಲಿ ಹಾಡಿದಾಗ ಮತ್ತು ಈ ಗೀತೆಯು ಬೇಂದ್ರೆಯವರೇ ಬರೆದದ್ದು ಎಂದು ತಿಳಿದಾಗ ಅತೀವ ಆಶ್ಚರ್ಯವಾಯಿತು. ಮಕ್ಕಳಿಗೆ ನಾನೂ ಒಂದೆರಡು ಹಾಡು ಹೇಳಿಕೊಟ್ಟೆ. ಮಕ್ಕಳ ಮುಗ್ಧ ಪ್ರಶ್ನೆಗಳಿಗೆ ಉತ್ತರಿಸುವಾಗ , ಕೆಲವೇ ವರ್ಷಗಳ ಹಿಂದೆ ನಾನುಕೂಡ  ಈ  ಮಕ್ಕಳಂತೆ ಇಂಥದೇ ಶಾಲೆಯಲ್ಲಿ ಹೀಗೆ ಖುಷಿ ಖುಷಿಯಾಗಿ ಹಾಡು ಹೇಳುತ್ತಾ ಕುಳಿತಿದ್ದಿದು ನೆನಪಾಯಿತು. ಆ ಶಾಲೆಯಿಂದ ವಾಪಸ್ ಧಾರವಾದ ತಲುಪುವ ಹೊತ್ತಿಗೆ ಮನಸೆಲ್ಲ ಬೇಂದ್ರೆ , ಮೇಘದೂತ , ರಾಜಕುಮಾರ್ ಅಣ್ಣ ಹೇಳಿದ ಬೇಂದ್ರೆ ಅಜ್ಜನ ಕಥೆಗಳು. ಇಷ್ಟು ಹತ್ತಿರ ಬಂದು ಬೇಂದ್ರೆಅಜ್ಜನ ಮನೆಯ ಆವರಣಕ್ಕೆ ಒಮ್ಮೆ ಹೋಗಿ ಬರದಿದ್ದರೆ ಅಂತ ಅನ್ನಿಸಿದ್ದರೂ ಆದಿನ ಸಮಯ ಮೀರಿ ಹೋಗಿತ್ತಾದ್ದರಿಂದ ಸುಮ್ಮನೆ ಮನೆಗೆ ಮರಳಿದೆ. 

ಇನ್ನೇನು ಸೂಟಿ ಮುಗೀತು ಮತ್ತ ಗಂಟುಮೂಟಿ ಕಟಗೊಂಡು ವಾಪಸ್ ಕರ್ಮಭೂಮಿಗೆ ಹೊರಡ್ಲಿಕ್ಕೆ ಬರೀ ಐದ ದಿನ ಉಳದಾವು ಅನ್ನೋ ಹೊತ್ತಿನಲ್ಲಿ ಮತ್ತೊಮ್ಮೆ ಧಾರವಾಡ ಹೋಗುವ ಗಳಿಗೆ ಕೂಡಿ ಬಂತು., ದೂರದಿಂದ ಬಂದ ಸ್ನೇಹಿತರೊಬ್ಬರಿಗೆ ಬೇಂದ್ರೆಯವರ ಮನೆ ನೋಡಬೇಕಿತ್ತು, ಬೇಂದ್ರೆ ಭವನದಲ್ಲಿ ಇದ್ದ ಸಿಬ್ಬಂದಿಯನ್ನು ಮನೆಯ ಗೇಟಿನೊಳಕ್ಕೆ ಹೋಗಲು ಅನುಮತಿ ಕೇಳಿದೆವು, ಆರಂ ಆಗಿ ಹೋಗಿ ಬರ್ರಿ , ನೀವು ಒಳಗೂ ಹೋಗಬಹುದು. ಅಲ್ಲೇ ಬೇಂದ್ರೆಯವರು ಬಳಸಿದ ವಸ್ತುಗಳು ಅದಾವು ಅದನ್ನೂ ನೋಡಿ ಬರ್ರಿ, ಆಮೇಲೆ ಅವರ ಭಾವಚಿತ್ರಗಳ ಸಂಗ್ರಹ ನೋಡ್ಲಿಕ್ಕೆ ಇಲ್ಲಿ ಬರ್ರಿ ಎಂದರು. 

ನಾವು ಗೇಟಿನೊಳಗೆ ಕಾಲು ಇಟ್ಟಾಗ ಚಂದದ  ಬೆಳಗು ಹಳದಿ ಗೋಡೆಯ ಮನೆಯನ್ನು ಇನ್ನೂ ಚಂದ ಮಾಡಿತ್ತು, ಅವರ ಮೊಮ್ಮೊಗಳು ಮತ್ತವರ ಪತಿ ತುಂಬಾ ಆತ್ಮೀಯವಾಗಿ ಮಾತನಾಡಿದರು, ನಾನು ಮೆತ್ತಗೆ 'ನಾನು ಹುಟ್ಟಿದ್ದು ಬೇಂದ್ರೆಯವರ ಜನ್ಮದಿನದಂದು' ಅಂದೆ.  ಹಂಗಾದ್ರ ನೀವೂ ಬರೀತೀರಿ? ಅಂದ್ರು, ನಾನು `ಇಲ್ಲ ರೀ ಹಾಡ್ತೀನಿ` ಅಂದೇ, ಅದು ಹೆಂಗ ಸಾಧ್ಯ ? ಅವರ ಹುಟ್ಟಿದ ದಿನ ಹುಟ್ಟಿ ಬರೆಯಲ್ಲ ಅಂದ್ರ ? ಅಂದು ನಕ್ಕರು. ಫೋಟೋ ವಿಡಿಯೋಗ್ರಫಿ ಹುಚ್ಚು ಇರುವ, ಅದಕ್ಕಿಂತ ಹೆಚ್ಚು ಬೇಂದ್ರೆ ಅವರನ್ನು ಪ್ರೀತಿಸುವ ನನ್ನ ಸ್ನೇಹಿತರು `ನಾವು ಕೆಲ ಹಾಡುಗಳನ್ನ ರೆಕಾರ್ಡ್ ಮಾಡ್ಕೊಬಹುದಾ? ಎಂದು ಕೇಳಿದಾಗ ಬೇಂದ್ರೆ ಅಜ್ಜನ ಮೊಮ್ಮಗಳು ಅರ್ರೆ ,ಅದ್ಯಾಕ್ ಕೇಳ್ತೀರಿ ಮಾಡ್ಕೋರಿ ಅಂತ ಖುಷಿಯಿಂದ ಒಪ್ಪಿಕೊಂಡರು. 
ಹಾಡುವ ಯಾವುದೇ ತಯಾರಿ ಮಾಡಿಕೊಳ್ಳದ ನಾನು ಅವರು ಹಾಡು ಅಂದ ತಕ್ಷಣ ನೆನಪಿಗೆ ಬಂದಿದ್ದು - ಇನ್ನು ಯಾಕ ಬರಲಿಲ್ಲವ್ವ ... ಕವಿತೆಯ ಸಾಲುಗಳು. 
ವಾಹನಗಳ  ಸದ್ದಿನ ನಡುವೆ ನಾನು ಹಾಡಿದ್ದು ಅದೆಷ್ಟು ಸರಿಯಾಗಿದೆಯೋ ಗೊತ್ತಿಲ್ಲ ,ಆದರೆ ಕನ್ನಡದ ಇಬ್ಬರು ಮೇರು ಕವಿಗಳು ವಾಸಿಸಿದ, ಓಡಾಡಿದ ಸ್ಥಳದಲ್ಲಿ ನನಗೆ ಅವರ ಹಾಡುಗಳನ್ನು ಹಾಡುವ ಅವಕಾಶ, ಅದೃಷ್ಟ ಭಗವಂತ ಒದಗಿಸಿಕೊಟ್ಟಿದ್ದಕ್ಕೆ ನಾ ಅವನಿಗೆ ಋಣಿ. (ಇಲ್ಲಿಗೆ ಬರುವ ಮೊದಲು ಮೈಸೂರಲ್ಲಿ ಕುವೆಂಪು ಅವರ ಮನೆಯ ಆವರಣದಲ್ಲಿ ಕೂತು ಸಹ ಅವರ ಒಂದು ಕವನವನ್ನು ಹಾಡಿದ್ದೆ.)
ಡಾ ದ ರಾ ಬೇಂದ್ರೆ ಅವರ ಮನೆಯ ಆವರಣ ,ಸಾಧನಕೇರಿ ಧಾರವಾಡ