ಸೇವೆಯ ಕನಸು-ಸಾರ್ಥಕ ಬದುಕು 

ಇದು ಇಂದಿರೆಯ ಕಥನ… 

ಹುಡುಗ, ಹುಡುಗಿ ಒಬ್ಬರನ್ನೊಬ್ಬರು ನೋಡಿ ಮೆಚ್ಚಿದ್ದಾಯ್ತು , ಹಿರಿಯರು ಮದುವೆಯ ಮಾತುಕತೆ ಶಾಸ್ತ್ರವನ್ನೂ ಪೂರೈಸಿದ್ದೂ ಆಯಿತು, ಇನ್ನೇನು ಬದುಕಿನ ಹೊಸ ಆರಂಭದ ಮುನ್ನುಡಿ ಬರೆಯುವ ದಿನ ಮದುವೆಯ ದಿನ ಬಂದೇ ಬಿಟ್ಟಿತು. ಈ ಒಂದು ದಿನಕ್ಕೆ ಬೇಕಾಗುವ ಪೂರ್ವತಯಾರಿ ಮಾಡಿದವರಿಗೇ ಗೊತ್ತು, ಛತ್ರ ದಿಂದ ಹಿಡಿದು ಅಡುಗೆಯವರ ತನಕ, ವಾಲಗದವರಿಂದ ಹಿಡಿದು ಪುರೋಹಿತರತನಕ ಎಲ್ಲವನ್ನ ನಿಭಾಯಿಸುವಾಗ ಮನಸಲ್ಲಿರುವುದು ಅದೊಂದೇ ಭಾವ ‘’ಮದುವೆ ಒಂದು ಚನ್ನಾಗಿ ಆಗಿ ಬಿಟ್ಟರೆ ಅಷ್ಟೇ ಸಾಕು’’ಅಪ್ಪ ಅಮ್ಮ ಮದುವೆಯ ಇತರ ಗಡಿಬಿಡಿಯಲ್ಲಿ ಮಗ್ನರಾಗಿರುವಾಗ ಮದುಮಗಳ ಕಸಿವಿಸಿ ಕೇಳಬೇಕೆ ? ಮದುವೆಯ ಕೇಂದ್ರ ಬಿಂದುವೇ ಆಕೆ. ಆಕೆ ಚನ್ನಾಗಿ ಕಾಣಬೇಕು , ಇನ್ನು ಶುರು, ಬ್ಯೂಟಿಶಿಯನ್ ಹುಡುಕಾಟ, ಅತ್ತೆ ಮಗಳ ಮದುವೆಗೆ ಬಂದವಳನ್ನ ಕರೆಯೋದೇ? ದೊಡ್ಡಮ್ಮನ ಮಗಳ ಮದುವೆಗೆ ಬಂದಿದ್ದಳಲ್ಲ ಅವಳನ್ನ ಕರೆಯೋದೇ? ಹಾಗೊಮ್ಮೆ ಯಾರನ್ನ ಕರೆಯೋದು ಅನ್ನೋದು ನಿರ್ಧಾರವಾದರೂ ಬಜೆಟ್ ಭೂತ ದಿಗ್ಗನೆ ಎದುರಿಗೆಬಂದು ನಿಲ್ಲುತ್ತದೆ.ಇತ್ತೀಚಿನ ದಿನಗಳಲ್ಲಿ ಮದುಮಗಳ ಸಿಂಗಾರಕ್ಕೆ ಹತ್ತು ಸಾವಿರದಿಂದ  ಒಂದು ಲಕ್ಷದವರೆಗೂ ಚಾರ್ಜ್ ಮಾಡುವ ಬ್ಯೂಟಿಶಿಯನ್ ಇದ್ದಾರೆ. ತರಹೇವಾರಿ ಪ್ಯಾಕೇಜ್ಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. 

ಆದರೆ ಕೆಲವೊಂದು ಸಮುದಾಯದ ವಿಶಿಷ್ಟ ಮದುವೆ ಧಿರಿಸು ಮತ್ತು ವಧುವನ್ನು ಸಿಂಗರಿಸುವ ರೀತಿ ಎಲ್ಲ ಬ್ಯೂಟಿಶಿಯನ್ ಗಳಿಗೆ ತಿಳಿದಿರುವುದಿಲ್ಲ, ಅಂಥವರನ್ನೇ ಹುಡುಕಿ ಅವರು ಹೇಳಿದಷ್ಟು ಮೊತ್ತವನ್ನು ಕೊಟ್ಟು ಕರೆಯುವುದು ಒಂದು ಬಗೆಯ ಅನಿವಾರ್ಯತೆಯೂ ಹೌದು. ಮೊದಲೆಲ್ಲ ಈ ಮದುಮಗಳನ್ನು ಸಿಂಗರಿಸುವ ಕೆಲಸ ಅವಳದೇ ಸಂಬಂಧಿಗಳಲ್ಲಿ ಯಾರೋ ಒಬ್ಬರು ಮಾಡಿ ಬಿಡುತ್ತಿದ್ದರು, ಆದರೆ ಈಗ ದಿನಮಾನ ಹಾಗಿಲ್ಲ ಹಣ ಕೊಟ್ಟರೂ ನಿರೀಕ್ಷಿಸಿದ ಸೇವೆ  ಲಭ್ಯವಾಗುವುದು ಅಪರೂಪ.ಇಂಥಹ ವ್ಯಾವಹಾರಿಕ ಪ್ರಪಂಚದಲ್ಲಿ ಪ್ರತಿಫಲಾಪೇಕ್ಷೆ ಇಲ್ಲದೇ ಕಳೆದ ೨೫ ವರುಷಗಳ ಕಾಲ ಮದುವೆ ಹೆಣ್ಣನ್ನು ಸಿಂಗರಿಸಿ ಆಕೆಯ ಆ ವಿಶೇಷ ದಿನಕ್ಕೆ ಮೆರಗನ್ನು ತರುವ ಕಾರ್ಯವನ್ನು ತಮ್ಮ ಜವಾಬ್ದಾರಿಎಂಬಂತೆ ಮಾಡಿ ಎಲೆಮರೆಯಲ್ಲೇ ಮಾಗಿದ ಹಿರಿಯ ಜೀವದ ಪರಿಚಯ ಇಲ್ಲಿದೆ.

ಇವರ ಪರಿಚಯ ನಿಮ್ಮೆಲ್ಲರಿಗೂ ಮಾಡಿಕೊಡುವ ಸದಾವಕಾಶ ನನಗೆ ದೊರೆತದ್ದಕ್ಕೆ ನನಗೆ ತುಂಬಾ ಹೆಮ್ಮೆ ಇದೆ. ಇವರು ನನ್ನ ಪತಿಯ ದೊಡ್ಡಮ್ಮ ನನ್ನ ದೊಡ್ಡ ಅತ್ತೆ. ನನಗಂತೂ ಇವರೊಂದಿಗೆ ಮಾತಾಡುತ್ತಾ ಕುಳಿತರೆ ನಿಜಕ್ಕೂ ಟೈಂ ಮಶೀನ್ನಲ್ಲಿ ಕುಳಿತು ಅವರು ಹೇಳುವ ಗತಕಾಲದ ಕಥೆಯನ್ನು ನಾನೂ ನೋಡುತ್ತಿದ್ದೇನೋ ಅನ್ನಿಸುವಷ್ಟು ನೈಜವಾಗಿ ಅವರು ಕಥೆ, ಅನುಭವ ರೂಪಿಸುತ್ತಾರೆ.  ನನ್ನ ದೊಡ್ಡತ್ತೆ ಶ್ರೀಮತಿ ಇಂದಿರಾ ನರಸಿಂಹ ಶಾನಭಾಗ್ ಉಡುಪಿ ಜಿಲ್ಹೆಯ ಸಾಲಿಗ್ರಾಮದವರು. ಪ್ರಸ್ತುತ ಕೋಟ ಗ್ರಾಮ ನಿವಾಸಿ.ತಮ್ಮ ಹದಿನಾಲ್ಕನೇ ವಯಸ್ಸಿಗೆ ಹಸೆಮಣೆ ಏರಿದ ಇಂದಿರಾ ಅವರ ಅನುಭವಗಳನ್ನು ಅವರ ಮಾತಲ್ಲೇ ಕೇಳಿ.

‘’ಅದು ೧೯೫೫ ರ ಸಮಯ, ಆಗಿನ ಮದುವೆಗಳು ಈಗಿನಂತಲ್ಲ, ಅದರ ಚಂದವೇ ಬೇರೆ. ಮದುವೆಯೆಂದರೆ ಸುಮ್ಮನೆಯೇ ? ಅದರ ಸುತ್ತ ಇರುವ ತಯಾರಿ ಸಂಭ್ರಮ, ಊಟತಿಂಡಿಯ ತಯಾರಿಗಳು, ಶಾಸ್ತ್ರ ಸಂಪ್ರದಾಯಗಳನ್ನು ಒಳಗೊಂಡು ನಾಲ್ಕೈದು ದಿನದ ಮದುವೆಗಳು, ಬಂದವರಿಗೆ ಬೆಲ್ಲದ ನೀರು ಬಾಳೆಹಣ್ಣು, ವೀಳ್ಯ ಕೊಟ್ಟು ಉಪಚರಿಸಿದರೆ ಅದು ದೊಡ್ಡ ಮರ್ಯಾದೆ ಕೊಟ್ಟಂತೆ. ಬಂದವರು ಕುಳಿತುಕೊಳ್ಳಲು ಈಗಿನಂತೆ ತರಹೇವಾರಿ ಖುರ್ಚಿಗಳಿರಲಿಲ್ಲ ಒಣಹುಲ್ಲು ಹಾಸಿನಮೇಲೆ ಗೋಣಿಚೀಲ ಅದರ ಮೇಲೊಂದು ಪಂಚೆ ಹಾಸಿದರೆ ಅದೇ ಸುಖಾಸನ. ಅದೆಷ್ಟೇ ಅನುಕೂಲಸ್ಥರಾಗಿದ್ದರೂ ಮದುವೆಗೆ ಗಂಜಿ ಊಟ ಹಾಕಿಸಲೇಬೇಕು. ವಧುವರರನ್ನು ಪಲ್ಲಕ್ಕಿಯಲ್ಲಿ ಕೂಡಿಸಿ ಮೆರವಣಿಗೆಯಲ್ಲಿ ಕರೆ ತಂದರೆ ಅದು ವಿಜೃಂಭಣೆಯ ಮದುವೆ.

ಇದೆಲ್ಲದರ ನಡುವೆ ವಧುವನ್ನು ಸಿಂಗರಿಸುವ ಗಮನ ಯಾರಿಗಿರುತ್ತಿತ್ತು?  ಚಿಕ್ಕ ಪ್ರಾಯದ ಹುಡುಗಿಯರಿಗೆ ಸೀರೆ ಸುತ್ತಿ ನಿಲ್ಲಿಸುವುದೇ ದೊಡ್ಡ ಕೆಲಸವಾಗಿತ್ತೇನೋ! ನನ್ನ ಮದುವೆಯಾದಾಗ ನನಗೆ ಹದಿನಾಲ್ಕು ವರ್ಷ.  ಎಲ್ಲರಿಗೂ  ಗಡಿಬಿಡಿ, ಅವರಲ್ಲೇ ಒಬ್ಬರು ಅದ್ಹೇಗೋ ನನಗೆ ಸೀರೆ ಸುತ್ತಿ, ಮಂಟಪದಲ್ಲಿ ನಿಲ್ಲಿಸಿದ್ದರು. ಆಗ, ಆ ನಂತರ ಅದೆಷ್ಟೋ ಸಲ ಅನ್ನಿಸುತ್ತಿತ್ತು ಮದುವೆ ಎಂಬುದು ಬದುಕಿನ ಅತಿ ಸುಂದರ ಗಳಿಗೆ ಹುಡುಗಿಯೊಬ್ಬಳು  ಮದುಮಗಳರೂಪದಲ್ಲಿ ರೂಪಂತರವಾಗುವ ಆ ಗಳಿಗೆ, ಯಾವುದೇ ತಯಾರಿ ಇಲ್ಲದೆ ಅದ್ಹೇಗೆ  ಮುಗಿಸಿಬಿಡುವುದು? ಅದೇ ಗಳಿಗೆಯಲ್ಲಿ, ಈ ಸುಸಂದರ್ಭವನ್ನು, ಅವಳನ್ನು ಇನ್ನೂ ಚಂದ ಮಾಡಿ ಆ ದಿನವನ್ನು ಇನ್ನೂ ವಿಶೇಷ ಮಾಡಬೇಕು, ನೆನಪಲ್ಲಿರುವಂತೆ ಮಾಡಬೇಕು ಎಂಬ ಕನಸಿನ ಬೀಜ ನನ್ನ ಮನದಲಿ ಮೊಳೆಯಿತು.

ಹದಿನಾಲ್ಕಕ್ಕೆ ಮದುವೆ ಹದಿನೈದು ಮುಗಿಯುವ ಮುನ್ನ ಮಗು ಹುಟ್ಟಿದ ಸಂಭ್ರಮ. ಕೂಡು ಕುಟುಂಬದ ಬಿಡುವಿರದ ದಿನಚರಿಯ ನಡುವೆ ನನ್ನ ಕನಸುಗಳು ಆಗಾಗ ನನ್ನ ಕೈ ಎಳೆದು ಕರೆಯುತ್ತಲೇ ಇದ್ದವು. ಆದರೆ ಯಾರಲ್ಲೂ ಹೇಳುವ ಧೈರ್ಯ ಬರಲಿಲ್ಲ. ಮಕ್ಕಳು ಬೆಳೆದು ದೊಡ್ಡವರಾದ ಮೇಲೆ, ಅದೆಷ್ಟೋ ವರುಷಗಳ ನಂತರ ಪತಿಯೊಂದಿಗೆ ನನ್ನ ಈ ಕನಸನ್ನು ಸಂಕೋಚದಿಂದಲೇ ಹಂಚಿಕೊಂಡಾಗ ಅವರು ಸಂತಸದಿಂದ ಒಪ್ಪಿಕೊಂಡು ಪ್ರೋತ್ಸಾಹಿಸಿದರು ಆದರೆ ಈ ಕೆಲಸವನ್ನು ಪ್ರತಿಫಲಾಪೇಕ್ಷೆ ಇಲ್ಲದೆ ಮಾಡಬೇಕು ಅನ್ನುವುದು ಅವರ ಆಶಯವಾಗಿತ್ತು. ಇಷ್ಟರಲ್ಲಿ  ಮಕ್ಕಳ ಮದುವೆಯೂ ಆಗಿತ್ತು, ಮಕ್ಕಳು ಸೊಸೆಯಂದಿರು ಕೂಡ ನನ್ನ ಈ ಬಹುದಿನದ ಆಸೆಗೆ ಒತ್ತಾಸೆ ಕೊಟ್ಟು ಸಹಕರಿಸಿದರು.  

ಹಾಗೆ ಶುರುವಾಯಿತು ನನ್ನ ಈ ನನಸಿನ ಪಯಣ,ತಮ್ಮ ಮದರಾಸಿನಿಂದ ಆಭರಣದ ಸೆಟ್ಗಳನ್ನ ಒಳ್ಳೆಯ ಚವರಿಗಳನ್ನು ತಂದು ಉಡುಗೊರೆಯಾಗಿತ್ತು ನನ್ನ ಕೆಲಸಕ್ಕೆ ಮತ್ತಷ್ಟು ಸಕಾರಾತ್ಮಕ ಬೆಂಬಲ ನೀಡಿದ. ಸಾರಸ್ವತ ಸಮಾಜದ ಮದುವೆಗಳಲ್ಲಿ  ವಧುವಿಗೆ ಕಚ್ಚೆ ಸೀರೆ ಉಡಿಸುವ ಪದ್ಧತಿ ಇದೆ ಜೊತೆಗೆ ಧಾರೆಯ ಸಮಯದಲ್ಲಿ ಸೆರಗಿನ ಬದಲು ಬಿಳಿಯ ಪಟ್ಟಿಯನ್ನು ಬಳಸುತ್ತಾರೆ ಈ ಶೈಲಿಯ ಸೀರೆ ಉಡಿಸುವುದು ಎಲ್ಲರಿಗೂ ಬರುತ್ತಿರಲಿಲ್ಲ . ನನ್ನ ತಣಿಯದ ಕುತೂಹಲ ಆಸಕ್ತಿ ಯಿಂದ ನಾನು ಈ ವಿಧಾನವನ್ನು ಕರಗತ ಮಾಡಿಕೊಂಡಿದ್ದೆ.  ಮಂಗಳೂರು ಮಲ್ಲಿಗೆಯ ಜಡೆ ಹಾಕುವುದು ನನಗೆ ಸಿದ್ದಿಸಿತ್ತು. ಅದರೊಂದಿಗೆ ಸಿಂಗಾರ ಮಾಡಲು, ಬೇಕಾಗುವ ಎಲ್ಲ ಪೂರಕ ತಯಾರಿ, ಕೌಶಲ್ಯವು ಇತ್ತು , ಅದಕ್ಕೆ ನನ್ನಲ್ಲಿ ಆತ್ಮ ವಿಶ್ವಾಸಕ್ಕೆ ಕೊರತೆ ಇರಲಿಲ್ಲ.

ಒಳ್ಳೆಯ ಉದ್ದೇಶದಿಂದ ಶುರುಮಾಡಿದ ಕೆಲಸಕ್ಕೆ ದೈವ ಬಲ ಸಿಗದೇ ಇರುತ್ತದೆಯ.? ದಿನ ಕಳೆದಂತೆ ಸಿಂಗರಿಸುವ ಕೈಂಕರ್ಯಕ್ಕೆ ಕರೆಯುವವರ ಸಂಖ್ಯೆ ಹೆಚ್ಚಿತು. ನನ್ನ  ಮನೆಯ ಹೆಣ್ಣು ಮಕ್ಕಳ ಮದುವೆಗಳಿಂದ ಶುರುವಾದ ಈ ಪಯಣ ಕೆಲವೊಮ್ಮೆ ಒಂದೇ ದಿನ ಎರಡೆರಡು ಮದುವೆಗೆ ನಿಮಂತ್ರಣ ಬರುವ ಮಟ್ಟಿಗೆ ನಡೆದು ಬಂತು. ಹಾಗಾದಾಗ ಇಲ್ಲ ಅನ್ನಲು ಮನಸು ಬಾರದೇ ಮಗಳು, ಸೊಸೆ ಇಬ್ಬರಿಗೂ ತರಬೇತಿ ಕೊಟ್ಟು ಅವರನ್ನು ಕಳಿಸುತ್ತಿದ್ದೆ.

ವರುಷ ಪೂರ್ತಿ ಮನೆಯಲ್ಲಿ ಒಂದಿಲ್ಲೊಂದು ಚವಲ, ಉಪನಯನ, ಮದುವೆ ಇದ್ದೇ ಇರುತ್ತಿತ್ತು ಆಗಂತೂ ನನಗೆ ಇನ್ನೂ ಖುಷಿ. ಕೆಲವೊಮ್ಮೆ ದೂರದೂರಿನಲ್ಲಿ ಮದುವೆಗಳು ಇರುತ್ತಿದ್ದವು. ಮೈಸೂರ, ಗೋವ, ಮುಂಬೈ ಬೆಂಗಳೂರು ಎಲ್ಲ ಕಡೆ ಮನೆಯ ಜವಾಬ್ದಾರಿಯ ನಡುವೆಯೂ ಆ ಮದುವೆಗೆ ಹೋಗಿ ನನ್ನ ಪಾಲಿಗೆ ಬಂದ ಸೇವಾಭಾಗ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೆ . 

ಆಸಕ್ತಿ ಇರುವ ಹಲವರಿಗೆ ನಾನು ತರಬೇತಿ ಕೊಟ್ಟಿದ್ದೇನೆ. ಬದಲಾಗುತ್ತಿರುವ ಕಾಲಕ್ಕನುಗುಣವಾಗಿ ಹೊಸ ವಿಧಾನಗಳನ್ನು ಕಲಿಯಲು ನಾನು ಸದಾ ಉತ್ಸಾಹ ತೋರುತ್ತಿದ್ದೆ, ಕಲಿಕೆಗೆ ವಯಸ್ಸಿನ ಮಿತಿ ಇಲ್ಲವಲ್ಲ!! ಈ ಇಪ್ಪತೈದು ವರುಷಗಳ (೧೯೮೩-೨೦೦೯)ಅನುಭವದಲ್ಲಿ  ನನ್ನ ಸಂಗ್ರಹದಿಂದ ಕಳೆದುಹೋದ ವಸ್ತುಗಳ ಪಟ್ಟಿ ದೊಡ್ಡದಿದೇ ಆದರೆ ಪಡೆದ ಆತ್ಮ ಸಂತೃಪ್ತಿಯಮುಂದೆ ಅದು ತೃಣ ಸಮಾನ.ನಮ್ಮಲ್ಲಿ ಹಿರಿಯರು ಯಾವಾಗಲು ಹೇಳುತ್ತಿದ್ದರು ‘’ವಧುವರರು ಸಾಕ್ಷಾತ್ ಲಕ್ಷ್ಮಿ ನಾರಾಯಣನ ರೂಪ’’ ಎಂದು ಅದನ್ನೇ ನಾನು ಕೂಡ  ನಂಬುತ್ತೇನೆ ಶ್ರದ್ಧೆ ನಿಷ್ಠೆಯಿಂದ ನನ್ನ ಈ ಸೇವೆಯನ್ನು ಭಗವಂತನ ಕೆಲಸವೆಂದೇ ಮಾಡಿದ್ದೇನೆ ಅದಕ್ಕಿಂತ ಹೆಚ್ಚು ಏನು ಬೇಕು? ಹೀಗೆಂದು ಕೇಳುವ ಇಂದಿರಾ ಅವರಿಗೆ ೮೨ರ ಹರೆಯ. ಈಗಲೂ ಅವರು ಉತ್ಸಾಹದ ಬುಗ್ಗೆ , ಕಾದಂಬರಿಗಳನ್ನು ಓದುವುದು ಅವರಿಗೆ ಅಚ್ಚು ಮೆಚ್ಚು. ತಾವು ಓದಿದ್ದನ್ನ ಕಣ್ಣಿಗೆ ಕಟ್ಟುವಂತೆ ಇತರರಿಗೆ ಹೇಳುವ ಅಪ್ರತಿಮ ಅಭಿವ್ಯಕ್ತಿ  ಅವರಲ್ಲಿದೆ. ಕಲಾತ್ಮಕವಾಗಿ ಹೂಮಾಲೆ ಕಟ್ಟುವುದು, ಸಾಂಪ್ರದಾಯಿಕ ಅಡುಗೆ ಮಾಡುವುದು ಇವರ ಹವ್ಯಾಸ. ಅದಲ್ಲದೆ ಹಲವು ಮರೆತೇ ಹೋದವು ಅನ್ನುವ ಕೊಂಕಣಿ ಜನಪದ ಕಥನ ಗೀತೆಗಳು ಇವರ ಸ್ಮೃತಿಯಲ್ಲಿವೆ.  ತಾವು ಮಾಡುವ ಪ್ರತಿಯೊಂದು ಕೆಲಸವನ್ನು ಅನುಭವಿಸಿ ಪ್ರೀತಿಯಿಂದ ಮಾಡುವುದು ಇವರ ಹೆಗ್ಗಳಿಕೆ.

ಇಂಥಹ ಅಪರೂಪದ ಜೀವನ್ಮುಖಿ ನನ್ನ ದೊಡ್ಡತ್ತೆ  ಅನ್ನುವುದೇ ನನ್ನ ಪಾಲಿನ ಹೆಮ್ಮೆ ಖುಷಿ. 

ಲೇಖನ ಮತ್ತು ಚಿತ್ರಗಳು ; ಅಮಿತಾ ರವಿಕಿರಣ್ 

 

ಶ್ರದ್ಧಾಂಜಲಿ

ಕೇವಲ ಸಪ್ತಸ್ವರಗಳಿಂದ ಅದೆಂಥ ಅಲೌಕಿಕ  ಲೋಕವನ್ನು ಕಟ್ಟಿಕೊಡುತ್ತದೆ ಸಂಗೀತ!!  ಮಾನವ ಭಾವನೆಗಳಿಗೆಲ್ಲ ಬಣ್ಣತುಂಬುತ್ತದೆ. ನಿಮಿಷಾರ್ಧದಲ್ಲಿ ನವರಸಗಳ ಪ್ರಪಂಚ ಮೈತಳೆಯುತ್ತದೆ. ನಿಮಗಿದು ಅರ್ಥವಾಗಬೇಕೆಂದರೆ ಒಮ್ಮೆ ಟಿ.ವಿ. ವ್ಯಾಲ್ಯೂಮ್ ಪೂರ್ತಿ ಬಂದ್ ಮಾಡಿ ಬರೀ ದೃಶ್ಯವನ್ನು ನೋಡಿ. ಅಲ್ಲಿ ದೆವ್ವದ ಸೀನ್ ಇದ್ದರೂ ನಿಮಗೆ ಹೆದರಿಕೆ ಎನಿಸುವುದಿಲ್ಲ.  ನಾಯಕ -ನಾಯಕಿ ಅಪ್ಪಿ ಮುತ್ತಿಟ್ಟರೂ ನಿಮ್ಮ ಹೃದಯದಲ್ಲಿ ಶೃಂಗಾರ ರಸ ಜಿನುಗುವುದಿಲ್ಲ.  ನಾಯಕ ಫೈಟಿಂಗ್ ಮಾಡುತ್ತ ಏಕಕಾಲಕ್ಕೆ ನೂರು ಜನರನ್ನು ಕೆಡವಿದರೂ  ನೀವು ರೋಮಾಂಚಿತರಾಗುವುದಿಲ್ಲ. ಅಂತೂ  ಸಂಗೀತವಿಲ್ಲದೇ ರಸವಿಲ್ಲ..ಬಣ್ಣವಿಲ್ಲ. ಅಂಥ ಸಂಗೀತ ಲೋಕದ ಮಾಂತ್ರಿಕ ತಬಲಾಪಟು , ಹಲವಾರು ಪ್ರಶಸ್ತಿಗಳ ಗೌರವ ಹೆಚ್ಚಿಸಿದ ಉಸ್ತಾದ್ ಝಾಕೀರ್ ಹುಸೇನ್ ಅವರ ಶೃದ್ಧಾಂಜಲಿಗೆ ಮುಡಿಪು ಇಂದಿನ ಅನಿವಾಸಿ ಸಂಚಿಕೆ.  ಸಂಪಾದಕರು ಗತಕಾಲದ ಕಲಾವಿದರೊದಿಗಿನ ಸಾಕ್ಷಾತ್ ಪ್ರಸಂಗವನ್ನು ನೆನೆಸಿಕೊಂಡಿದ್ದಾರೆ. ರಾಧಿಕಾ ಜೋಶಿಯವರು ತಮ್ಮದೇ ಆದ ಅನನ್ಯ ಶೈಲಿಯ ಇಂಗ್ಲೀಷ್ ಕವನವೊಂದರ ಮೂಲಕ ಭಾವಪೂರ್ಣ ನಮನಗಳನ್ನು ಸಲ್ಲಿಸಿದ್ದಾರೆ. ಬನ್ನಿ.. ನೀವೂ ಓದಿ ನಿಮ್ಮ ಪಾಲಿನ ಅಂಜಲಿಯನ್ನು ಸಲ್ಲಿಸಿ.                           

~ ಸಂಪಾದಕಿ

ವಾಹ್! ಉಸ್ತಾದ್ ವಾಹ್!!

ಕೆಲವು ಚೇತನಗಳೇ ಹಾಗೆ. ಸುಮ್ಮನೇ ಅವರ ಹೆಸರು ಕೇಳಿದರೇನೇ  ಮನಕ್ಕೆಂಥದೋ ಹಾಯೆನ್ನಿಸುವ ಭಾವ, ಅದೇನೋ ನಿರಾಳ. ಎಲ್ಲಿಂದಲೂ, ಏನೂ ನೇರ ಸಂಬಂಧವಿರದೆಯೂ ಅದೇನೋ ಆತ್ಮೀಯ – ಆಪ್ತ ಅನುಭೂತಿ.  ಉಸ್ತಾದ್ ಝಾಕೀರ ಹುಸೇನ್ ಅಂಥದೇಒಂದು ಚೆಂದದ ಚೇತನ. ‘ ಚೆಲುವಯ್ಯಾ ಚೆಲುವೋ ತಾನಿತಂದಾನಾ’ ಅಂದಂತೆ ಅದೆಷ್ಟು ಚೆಲ್ವಿಕೆಗಳ  ಸಂಗಮ?! ಸುಂದರ ಶರೀರ- ಶಾರೀರ– ಅಂತ:ಕರಣಗಳು, ತಬಲಾವನ್ನು ನಾದದ ನದಿಯಾಗಿಸುವ ಅವರ ಶೈಲಿ, ನೆರೆದವರ ಮನ ತಿಳಿಯಾಗಿಸುವ ಲಘು ಹಾಸ್ಯದ  ಎಲ್ಲೆ ಮೀರದ ತೂಕದ ಮಾತುಗಳು. ಒಂದೊಂದೂ ನ ಭೂತೋ ನ ಭವಿಷ್ಯತಿ.

   ಎಲ್ಲಿಂದ, ಯಾವಾಗಿಂದ ಶುರುವಾದದ್ದು ಅವರ ನಂಟು ಎಂದು ಯೋಚಿಸಿ ನೋಡಿದರೆ – ‘ ವಾಹ್ !,ತಾಜ್ ಬೋಲಿಯೆ’ ದಿನಗಳಿಂದ ಅನ್ನಬಹುದು  ಸದಾ ಹಸನ್ಮುಖದ ಈ ಚೆಲುವ ಚೆನ್ನಿಗರಾಯನ ತಬಲಾದ ಮೇಲಿನ ಬೆರಳುಗಳ  ಆ ಸುರಳೀತ, ಸುಲಲಿತ ನಾಧಿನ್ ಧಿನ್ನಾ ನರ್ತನ, ಅಲೆಅಲೆಗುಂಗುರುಗೂದಲಿನ ತೋಂತನನ ನೋಡುತ್ತಿದ್ದರೆ ನಮ್ಮ ಹೃದಯವೂ ‘ ಧಕ್ ಧಕ್ ಕರನೇ ಲಗಾ’  ಆಗಿ ಅಮೃತವಾಹಿನಿಯೊಂದು ಹರಿಯುತ್ತಿದ್ದುದು ಸುಳ್ಳಲ್ಲ. ಸಂಗೀತದ ಬಗ್ಗೆ ಒಂದು ಕೈ ಒಲವು ಹೆಚ್ಚಾದದ್ದೇ ಇವರಿಂದ ಎನ್ನಬಹುದು. ನಮ್ಮ ಅಡುಗೆಮನೆಯಲ್ಲಿ red label   ಹೋಗಿ Taj ಚಹಾ ಬರಲೂ ಇವರೇ ಕಾರಣ.

ಕಲೆಯ ಬಗೆಗಿನ ಅವರ ಪ್ರೀತಿ, ತುಂಬಿದ ಕೊಡ ತುಳುಕುವುದಿಲ್ಲ ಎನ್ನುವಂತಿರುವ ನಯವಿನಯ, ಸಾದಾತನಗಳು, ಮಾನವೀಯತೆಗೆ ಮಿಡಿವ ಅವರ ಮಾತು – ವರ್ತನೆಗಳು ಅವರನ್ನು ಬೇರೆಯದೇ ನೆಲೆಯಲ್ಲಿ ನಿಲ್ಲಿಸುತ್ತವೆ. ಅವರೇ ಹೇಳುವಂತೆ ಸಂಗೀತಕ್ಕಿರುವ ಶಕ್ತಿ ಅಪರಿಮಿತ. ಅದು ಯಾವಾಗಲೂ ಎಲ್ಲ ದೇಶ, ಕಾಲ, ಜನಾಂಗದಲ್ಲೂ ಮನಸ್ಸುಗಳನ್ನು ಬೆಸೆಯುವ ಕೆಲಸ ಮಾಡುತ್ತದೆ. ಯಾವ ಧರ್ಮಕ್ಕೂ, ಪ್ರಭುತ್ವಕ್ಕೂ ಇರದ ಅಸಾಧಾರಣ ಶಕ್ತಿಯದು. 

   ಅದು ಸುಮಾರು 88 – 89 ರ ಇಸ್ವಿ. ‘ ಸುರ್ – ಸಂಗಮ್’ ಎನ್ನುವ ಕಾರ್ಯಕ್ರಮಕ್ಕೆ ಝಾಕೀರ್ ಹುಸೇನ್ ಬರುತ್ತಿದ್ದಾರೆನ್ನುವ ಸುದ್ದಿ ಗೊತ್ತಾಯಿತು. ಆದರೆ ಟಿಕೆಟ್ ದರ  500 ರೂಪಾಯಿಗಳು. ಆಗಿನ ಕಾಲಕ್ಕೆ 500 ರ ಮುಖವನ್ನೂ ನಾವು ನೋಡಿರಲಿಲ್ಲ. ಸಿನೆಮಾ  ನೋಡಲು ಹೋದರೆ  ಮೂರು ರೂಪಾಯಿ ಇಪ್ಪತ್ತು ಪೈಸೆಯ ಬಾಲ್ಕನಿ ಟಿಕೆಟ್ ತೆಗೆಸಲೂ ಹಿಂದು ಮುಂದೆ ನೋಡುವ ಕಾಲವದು. ಕಾಲೇಜಿನ ಲೆಕ್ಚರರ್ ಆಗಿದ್ದ ನಮ್ಮ ಮುದ್ದಣ್ಣ ಮಾಮಾಗೆ ಎರಡು ಪಾಸ್ ಸಿಕ್ಕಿತ್ತು. ನಮ್ಮದು 5 ಜನರ ಗ್ಯಾಂಗ್. ( ನಾನು ಹಾಗೂ  4 ಜನ ಮಾಮಾನ ಮಕ್ಕಳು) ನಾವೆಲ್ಲರೂ ನಮಗೂ ಹೋಗಲೇಬೇಕು ಎಂಬ ಒಕ್ಕೊರಲಿನ ಗಾಯನವನ್ನೂ, ಝಾಕೀರ್ ಹುಸೇನ್ ರನ್ನು ನೋಡಲೇಬೇಕೆಂದು ಧಿಮಿಧಿಮಿ ನೃತ್ಯವನ್ನೂ ಶುರುಮಾಡಿದೆವೆನ್ನಿ. “ಅಲ್ರೇ , ನಿಮಗೇನು ಮಹಾ ರಾಗತಾಳ ಜ್ಞಾನ ಅದ? 2-3 ತಾಸಿನ ಕಛೇರಿ ಅದು. ಬ್ಯಾಸರ ಆಗಿ ಬಿಡತದ ನಿಮಗ.” ಅಂದ ಮಾಮನಿಗೆ “ ನಮಗೆಲ್ಲಿ ತಬಲಾ ಕೇಳೂದದ? ಝಾಕೀರ ಹುಸೇನ್ ರನ್ನು ಹತ್ತಿರದಿಂದ ನೋಡಿ ಖುಷಿ ಪಡೂದದ” ಎನ್ನುವ ನಮ್ಮ ಉತ್ತರ ಸಿದ್ಧವಾಗಿತ್ತು  “ ದಿನಾ ಬೆಳಗಾದ್ರ ಟಿವ್ಯಾಗ ನೋಡತಿರಲಾ?” “ ಹೂಂ. ದಿನಾ ಟಿವ್ಯಾಗ ನೋಡಿ ನೋಡೇ ಅವರನ್ನ ನೋಡಲೇಬೇಕು ಅನ್ನಿನಿಸಿದ್ದು. ಇಲ್ಲೀತನಾ, ನಮ್ಮ ಬಿಜಾಪೂರಿಗೆ ಅದರಲ್ಲೂ ನಮ್ಮ ಮನೆ ಹತ್ತಿರದGovt.high school ಗೆ ಬರುತ್ತಿದ್ದಾರೆ. ನಾವು ಹೋಗಲಿಲ್ಲ ಅಂದರೆ ಅದ್ಹೇಗೆ ?” ಎನ್ನುವುದು ನಮ್ಮ ವಾದ. ಬೆಳಗ್ಗೆಯಿಂದ ಸಂಜೆಯವರೆಗೆ ಮಾಮನ ಮುಖ ಕಂಡೊಡನೆ ‘ ಝಾಕೀರ್, ತಬಲಾ. ಝಾಕೀರ, ತಬಲಾ’  ಅಂತ ಸ್ಲೋಗನ್ ಕೂಗುತ್ತ ದೊಡ್ಡ ಹರತಾಳವನ್ನೇ ಮಾಡಿ ಅಂತೂ ಯಶಸ್ವಿಯಾದೆವೆನ್ನಿ.ನಮ್ಮ ಬಡಬಡಿಸುವಿಕೆಗೆ, ಹಟಕ್ಕೆ ಸೋತ ನಮ್ಮ ಸೋದರಮಾವ 1,500 ರೂಪಾಯಿಗಳನ್ನು (ಆಗಿನ ಕಾಲಕ್ಕೆ) ಕೊಟ್ಟು ಇನ್ನೂ ಮೂರು ಟಿಕೆಟ್ ಖರೀದಿಸಿ ನಮ್ಮನ್ನು ಆ ಕಾರ್ಯಕ್ರಮಕ್ಕೆ ಕಳಿಸಿದ್ದರು. ಅವರು ಸ್ವಲ್ಪ  ಜೋರು ಮಾಡಿ ನಮ್ಮನ್ನು ಸುಮ್ಮನಾಗಿಸಬಹುದಿತ್ತು. ‘ ರೊಕ್ಕದ ಗಿಡಾ ಅದ ಎನು ಹಿಂದ?’ ಎನ್ನಬಹುದಿತ್ತು. ಆದರೆ ಹಾಗೆ ಮಾಡದೇ ನಮ್ಮ ಬಾಲಿಶ ಹುಚ್ಚುತನವನ್ನು ಅಪರೋಕ್ಷವಾಗಿ ಬೆಂಬಲಿಸಿದ ಆ ತಾಯಂಥಕರಣದ ಜೀವಕ್ಕೆ ಎಷ್ಟು ಮಣಿದರೂ ಕಡಿಮೆ ಎನಿಸುತ್ತದೀಗ.

 ಬಂಗಾರದ ಗುಂಡಿ, ಚೈನು ಪೋಣಿಸಿದ, ತಿಳಿನೀಲಿ ಬಣ್ಣದ ಉದ್ದನೆಯ ಕುರ್ತಾ, ಬಿಳಿ ಶುಭ್ರ ಪಾಯಿಜಾಮಾ ಧರಿಸಿದ ಅವರು ಸ್ಟೇಜ್ ಮೇಲೆ ಬಂದರೆ ನನಗೆ ಯಾರೋ ದೇವ ಮಾನವ ನಡೆದು ಬಂದಂಥ ಭಾವ. ತಬಲಾದ ರಠಈಕ ಅರ್ಥವಾಗದಿದ್ದರೂ ಆ ನಾದದ ಲಹರಿ ತಾನಾಗೇ ನಮ್ಭನ್ನು ತನ್ನ ಸೆಳವಿನಲ್ಲಿ ಎಳೆದೊಯ್ದು ನಮ್ಮನ್ನು ತೇಲಿಸಿ, ತೊಯ್ಯಿಸಿದ್ದು, ಆ ತಬಲಾ – ಡಗ್ಗಾಗಳ ಮೇಲೆ ಅವರು ಹರಿಸಿದ ಆ ದೈವೀಕ ನಾದದ ಹೊಳೆ, ಗುಡುಗಿನ ಆರ್ಭಟ, ಮಳೆಯ ಟಪಟಪ  ಹನಿಗಳ ಸದ್ದು, ಬೀಸುವ ರೊಯ್ ರೊಯ್ ಗಾಳಿ, ಶಿವನ ಡಮರುಗ, ಕೃಷ್ಣನ ಪಾಂಚಜನ್ಯ, ಕುದುರೆಯ ಹೇಷಾರವ, ಖುರಪುಟ.. ಕೇಳುತ್ತಿದ್ದ ಶ್ರೋತೃಗಳೆಲ್ಲ ದಂಗಾಗಿದ್ದರು; ಗುಂಗಿನಲ್ಲಿದ್ದರು.

ಆಗ ಸೆಲ್ಫಿಯ ಕಾಲವಲ್ಲ, ಆಟೋಗ್ರಾಫ್ ದ ಸ್ಪೆಲ್ಲಿಂಗೂ ಗೊತ್ತಿರಲಿಲ್ಲ. ಆದರೆ ಆ ಸುನೆಹರೆ ಕ್ಷಣಗಳು ಎದೆಯ ಗೂಡಲ್ಲಿ ನಿತ್ಯನಿರಂತರ ಹಸಿರು.ಇಷ್ಟು ಬೇಗ ಹೊರಡಬಾರದಿತ್ತು ಉಸ್ತಾದ್ ನೀವು. ಇನ್ನೂ ಇರಬೇಕಿತ್ತು.’ ಸುರ್ ಕಿ ಸಾಧನಾ ಪರಮೇಶ್ವರ್ ಕಿ’ ಎಂಬ ಆ ನಿಮ್ಮ ‘ ಸೋಚ್’ ಇನ್ನಷ್ಟು ಹರಡಬೇಕಿತ್ತು. “ ಕಲಾವಿದ ಹೋದರೇನಂತೆ? ಕಲೆ ಎಲ್ಲಿಗೂ ಹೋಗುವುದಿಲ್ಲ..ಯಾವೂದೂ ಖಾಲಿಯಾಗುವುದಿಲ್ಲ” ಎಂದು ನೀವೇ ಹಲವಾರು ಬಾರಿ ಸಂದರ್ಶನಗಳಲ್ಲಿ ಹೇಳುತ್ತಿದ್ದಿರಾದರೂ ನೀವು ತೆರವು ಮಾಡಿದ ಜಾಗ ಸದಾ ಖಾಲಿಯೇ. ಅದಕ್ಕ್ಯಾವ ಪರ್ಯಾಯವೂ ಇಲ್ಲ. ಹೋಗಿ ಬನ್ನಿ; ಭಾವಪೂರ್ಣ ಶೃದ್ಧಾಂಜಲಿಗಳು.

~ಗೌರಿ ಪ್ರಸನ್ನ

No photos, no videos to mark my tale,
Yet his magic fills my spirit’s sail.
Ustad Zakir Hussain, the tabla’s very name,
A legend whose glory ignites music’s flame.

As a child, through palace halls and Dasara nights,
I witnessed his art beneath Mysuru’s lights.
The memory is faint, yet vivid and clear,
A childlike smile—so pure, so near.

Oh, that smile! A symphony of untold lore,
A joy that sprang from his music’s core.
Each beat of the tabla, each rhythmic embrace,
Lit up his eyes, adorned his face.

Did he ever feel nerves, or pressures vast?
If so, that smile—steadfast, unsurpassed—
Taught us all, in life’s demanding race,
To wear our joy as a saving grace.

I’ve watched his videos, a hundred, no less,
Never a frown, never distress.
Eyes that sparkled, fingers that flew,
Creating celestial rhythms anew.

Even the tea ad, with his father in frame,
Hair aflutter, rhythm the same,
Added a cadence, a timeless beat,
Turning the mundane into something sweet.

My memories now soar beyond the clouds,
Among the stars, where his spirit resounds.
For Zakir Hussain, a maestro so bright,
Plays on forever, in music’s eternal light.

~ ರಾಧಿಕಾ ಜೋಶಿ