ಅನಿವಾಸಿ ಭಾರತೀಯ ವೈದ್ಯ ಕವಿಗೋಷ್ಠಿ – ಭಾಗ 1; ಆಯ್ದ ಕವನಗಳು

ಪ್ರಿಯರೇ, ನಮಸ್ಕಾರ. ಹೊಸವರ್ಷದ ಶುಭಾಶಯಗಳು (ನನ್ನಿಂದ). ಹೋದ ವಾರ ಭಾರತೀಯ ವೈದ್ಯ ಸಂಘದ ಕರ್ನಾಟಕ ಶಾಖೆಯ ವತಿಯಿಂದ ಆಯೋಜಿತವಾದ ಅನಿವಾಸಿ ಭಾರತೀಯ ಕವಿಗೋಷ್ಠಿ ನಡೆಯಿತು. ಇದರಲ್ಲಿ ಹಲವಾರು ಭಾರತೀಯ ಮೂಲದ ಕವಿ-ಕವಯತ್ರಿಯರು ತಮ್ಮ ಕವನಗಳನ್ನು ಓದಿದರು.  ಅಮೇರಿಕಾ, ಇಂಗ್ಲಂಡ್ ಮತ್ತು ಕತಾರ್ ದೇಶವಾಸಿಗಳಾಗಿರುವ ಕವಿಗಳ ಕವನಗಳು ವಿವಿಧ ವಿಷಯಗಳ ಮೇಲಿದ್ದು,  ಅವುಗಳ ಕನ್ಸ್ಟ್ರಕ್ಷನ್, ಭಾಷೆ, ಪದಲಾಲಿತ್ಯ ಆಕರ್ಷಕವಾಗಿದ್ದವು. ಇಂಗ್ಲಂಡಿನ ಕವಿಗಳ ಪರಿಚಯ ಅನಿವಾಸಿ ಗುಂಪಿನ ಮೂಲಕ ನನಗೆ ಇದೆ, ಡಾ. ಜಯಕೀರ್ತಿ ರಂಗಯ್ಯ ಅವರನ್ನು ಹೊರತುಪಡಿಸಿ.  ಕೊನೆಯಲ್ಲಿ ಗೋಷ್ಟಿಯ ಅಧ್ಯಕ್ಷತೆ ವಹಿಸಿದ್ದ ಅಮೆರಿಕದ ಡಾ. ತ್ರಿವೇಣಿ ಶ್ರೀನಿವಾಸರಾವ್ ಅವರು, ಪ್ರತಿ ಕವನದ ವಿಮರ್ಶೆ ಮಾಡಿದರು. ಡಾ. ಗಡ್ಡಿ ದಿವಾಕರ್ ಅವರು ಕಾರ್ಯಕ್ರಮವನ್ನು ಸಮಯ ತಪ್ಪದಂತೆ, ಇನ್ನೊಬ್ಬ ವೈದ್ಯಕವಯಿತ್ರಿ ಡಾ. ವೀಣಾ ಎನ್ ಸುಳ್ಯ ಅವರ ಸಹಯೋಗದಲ್ಲಿ ನಡೆಸಿಕೊಟ್ಟರು.   ಅದರಲ್ಲಿನ ಆಯ್ದ ಕವನಗಳನ್ನು ಇಂದಿನ ಬ್ಲಾಗಿನಲ್ಲಿ ಪ್ರಸ್ತುತಪಡಿಸುತ್ತಿದ್ದೇವೆ, ಆಯಾ ಕವಿಗಳ ಪರಿಚಯದೊಂದಿಗೆ. ಈ ಕಾರ್ಯಕ್ರಮದ ಹಿನ್ನೆಲೆಯನ್ನು ಬರೆದು ಕೊಟ್ಟ ಮಿತ್ರ ರಾಮಶರಣರಿಗೆ ವಂದನೆಗಳು. 
ಕವನಗಳನ್ನು ಎರಡು ಆವೃತ್ತಿಗಳಲ್ಲಿ ಭಾಗ ಮಾಡಿ ಹಾಕುತ್ತಿದ್ದೇನೆ. ಎಂದಿನಂತೆ ಓದಿ ನಿಮ್ಮ ಅನಿಸಿಕೆ ಬರೆಯುವುದು.
ಧನ್ಯವಾದಗಳೊಂದಿಗೆ – ಲಕ್ಷ್ಮಿನಾರಾಯಣ ಗುಡೂರ, ವಾರದ ಸಂಪಾದಕ.

**************************************************************

ಹಿನ್ನೆಲೆ: (ಕೃಪೆ: ಡಾ. ರಾಮಶರಣ ಲಕ್ಷ್ಮೀನಾರಾಯಣ) 
ಭಾರತೀಯ ವೈದ್ಯ ಸಂಘದ ಕರ್ನಾಟಕ ಘಟಕ ವೈದ್ಯ ಬರಹಗಾರರ ಸಮಿತಿಯನ್ನು ಸುಮಾರು ೫ ವರ್ಷಗಳ ಹಿಂದೆ ಪ್ರಾರಂಭಿಸಿತು. ಈ ಸಮಿತಿ ಹಲವಾರು ಕಾರ್ಯಕ್ರಮಗಳನ್ನು ನಡೆಸಿದೆ. ಕೋವಿಡ್ ಸಮಯದಲ್ಲಿ ವೈದ್ಯ ಕವಿ ಸಮ್ಮೇಳನವನ್ನೂ ನಡೆಸಿತ್ತು. ಎರಡು ವರ್ಷಗಳ ಹಿಂದೆ ವೈದ್ಯ ಸಂಪದ ಎಂಬ ದ್ವೈ ಮಾಸಿಕ ಪತ್ರಿಕೆಯನ್ನು ಅಂತರ್ಜಾಲದಲ್ಲಿ ಪ್ರಕಟಿಸುತ್ತಿದೆ. ಅನಿವಾಸಿಯಾ ಸದಸ್ಯರಾದ ಡಾ. ಕೇಶವ ಕುಲಕರ್ಣಿ ಈ ಸಂಚಿಕೆಯ ಮೊತ್ತ ಮೊದಲ ಅನಿವಾಸಿ ಭಾರತೀಯ ವಿಭಾಗದ ಸಂಪಾದಕರಾಗಿ ೨೦೨೨ರಲ್ಲಿ ಕಾರ್ಯನಿರ್ವಹಿಸಿದರು. ಆಗ ಅವರು ಈ ಪತ್ರಿಕೆಯ ಸಂಚಿಕೆಗಳನ್ನು ವಾಟ್ಸ್ಯಾಪ್ ಮೂಲಕ ನಮ್ಮೊಡನೆ ಹಂಚಿಕೊಂಡಿದ್ದು ನೆನಪಿರಬಹುದು. ಕನ್ನಡ ವೈದ್ಯ ಬರಹಗಾರರ ಸಮಿತಿಯ ಅಧ್ಯಕ್ಷೆ ಡಾ. ವೀಣಾ ಸುಳ್ಯ ಅನಿವಾಸಿ ವೈದ್ಯರನ್ನು ಒಟ್ಟುಗೂಡಿಸಿ ಕವಿ ಸಮ್ಮೇಳನವನ್ನು ಜಾಲ ತಾಣದಲ್ಲಿ ನಡೆಸುವ ಇಚ್ಛೆಯನ್ನು ವ್ಯಕ್ತಪಡಿಸಿದರು. ಅವರೇ, ಡಾ. ಗಡ್ಡಿ ದಿವಾಕರ್ ಅವರನ್ನು ನಿರ್ವಾಹಕರನ್ನಾಗಿ ನಿಯೋಜಿಸಿದರು. ಈಗಿನ ವೈದ್ಯ ಸಂಪದದ ಅನಿವಾಸಿ ವಿಭಾಗದ ಸಂಪಾದಕರ ಹಾಗೂ ತಮ್ಮ ಸಂಪರ್ಕ ಜಾಲದ ಮೂಲಕ ವೈದ್ಯ ಬರಹಗಾರರನ್ನು ಕಲೆ ಹಾಕಿದರು. ಒಪ್ಪಿಕೊಂಡ ಕವಿಗಳಿಂದ ಕವನಗಳನ್ನು ಪಡೆದುಕೊಂಡು, ಅಧ್ಯಕ್ಷರಾದ ಅಮೆರಿಕೆಯಲ್ಲಿ ನೆಲೆಸಿರುವ ತ್ರಿವೇಣಿ ರಾವ್ ಅವರಿಗೆ ಅವನ್ನು ತಲುಪಿಸಲಾಗಿತ್ತು. ಮೊದಲೇ ನಿಗದಿ ಪಡಿಸಿದ ದಿನಾಂಕ ಹಾಗೂ ಸಮಯಕ್ಕೆ ಸರಿಯಾಗಿ ಅಚ್ಚುಕಟ್ಟಾಗಿ ಕಾರ್ಯಕ್ರಮ ರವಿವಾರ ಮಧ್ಯಾಹ್ನ ೨:೩೦ಕ್ಕೆ ಪ್ರಾರಂಭವಾಯಿತು.

****************************

ಡಾ. ಮುರಳಿ ಹತ್ವಾರ ಅವರ ಮೂಲ ಕೋಟೇಶ್ವರ. ಬೆಳೆದ ಊರು ಬಳ್ಳಾರಿ. ಬೆಂಗಳೂರು, ಬಳ್ಳಾರಿಗಳಲ್ಲಿ ವಿದ್ಯಾಭ್ಯಾಸ ಮುಗಿಸಿದ ಮುರಳಿ, ಈಗ ಲಂಡನ್ನಿನಲ್ಲಿ ಹಾರ್ಮೋನು ವೈದ್ಯರಾಗಿ ಕಾರ್ಯನಿರತರಾಗಿದ್ದಾರೆ. ಮುರಳಿ ನಮ್ಮ ಅನಿವಾಸಿ ಬ್ಲಾಗಿನ ಓದುಗರಿಗೆ, ತಮ್ಮ ಕವನ, ಹೈಕುಗಳ ಮೂಲಕ ಈಗಾಗಲೇ ಚಿರಪರಿಚಿತರಾಗಿದ್ದಾರೆ.

ಹೆಜ್ಜೆಗಳು:

ನಿನ್ನೆ ನಡೆದ ಹೆಜ್ಜೆಗಳ ಗುರುತು
ಹಿಡಿಯಲು ಮತ್ತೆ ಮರಳುವಾಸೆ
ಅಳಿಸಿದ ಅಲೆಗಳಲ್ಲಿ ಅದನ್ನು
ಹುಡುಕುವದು ಹೇಗೆ?

ಹೆಜ್ಜೆಗಳ ದಾರಿ ಎಳೆದ ಮೋಡಗಳೆಲ್ಲ
ಮಳೆಯಾಗಿ ಮರೆಯಾಗಿವೆ
ಸುಡುವ ಬಿಸಿಲಿನ ಸೂರ್ಯ
ಸರಿದಂತೆ ಹೊರಳುವ ನೆರಳಿನ ದಿಕ್ಕು,
ನಕ್ಷತ್ರಗಳ ಬೆಳಕು ಹೇಳುವ ದಾರಿ
ತಿಳಿಯುವುದು ಹೇಗೆ?

ಎಷ್ಟು ಸದ್ದಿನ ಹೆಜ್ಜೆಗಳು!
ಒಂದು ಊರುವದರಲ್ಲಿ ಮತ್ತೊಂದು
ಬೇಗ! ಬೇಗ! ಬೇಗ!
ಮುಂದೆ ಹೋದಷ್ಟೂ ಅವಸರ,
ದಾರಿಯ ಹೂಗಳ ಪರಿಮಳವೂ ತಿಳಿಯದಷ್ಟು.
ಬೇಲಿಯ ಮುಳ್ಳುಗಳ ಕಲೆ ಮೈತುಂಬಾ.

ಯಾವ ಹೆಜ್ಜೆಯ ಜಾಡು, ಯಾವ ನೆರಳಿನ ಛಾಯೆ?
ನಿನ್ನೆಯೋ? ನಾಳೆಯೋ?
ನಂಬಿಕೆಯ ದೀವಿಗೆಯೊ? ಕಲ್ಪನೆಯ ಮಾಯೆಯೋ? ಎಲ್ಲ ಬೆಳಕೀಗ ಶೂನ್ಯ; ಮನಸು ಮುಳುಗಿದ ಗುಡ್ಡೆ.
ಹೊಸ ಉಸಿರಿನ ಹುಡುಕಾಟ
ನೀರ ದಾಟಿಸುವ ಸೇತುವೆಯ ಕಟ್ಟ ಬೇಕಿನ್ನೂ

ಕಾಲಿನಡಿ ಸರಿದ ನೀರು, ತೊಯ್ದ ಮಣ್ಣಿನ ಸ್ಪರ್ಶ
ಮೈ ಸೋಕಿದ ತಂಗಾಳಿ, ಕಣ್ತೆರೆಯೆ ಆಗಸದ ಕೆಂಪು
ಸುತ್ತ ತರತರದ ಕಂಪಿನ ಹೂಗಳು
ಉಸಿರೆಳೆದು ನಿಂತ ಮನದೊಳಗೆ ಹೊಸ ರೆಕ್ಕೆಗಳು

ಕಾಲು ಮುಟ್ಟಿದ ಅಲೆ ಕರೆದು ಹೇಳಿತು:
ಈ ಹೆಜ್ಜೆಯ ಗುರುತು ನೀನೆ ಇಟ್ಟುಕೋ.

- ಡಾ. ಮುರಳಿ ಹತ್ವಾರ್

**************************************

ಡಾ. ಜಯಕೀರ್ತಿ ರಂಗಯ್ಯ: ಹುಟ್ಟಿದ್ದು, ಬೆಳೆದಿದ್ದು: ಚಿಕ್ಕನಾಯಕನ ಹಳ್ಳಿ, ತುಮಕೂರು ಜಿಲ್ಲೆ. ಓದಿದ್ದು: ಎಂ.ಬಿ.ಬಿ.ಎಸ್ (ಬಿ.ಎಂ.ಸಿ) ಎಂ.ಡಿ. ಮೈಕ್ರೋಬಯಾಲಜಿ (ಜಿಪ್ಮರ್, ಪಾಂಡಿಚೆರಿ), ಎಫ್.ಆರ್.ಸಿ.ಪ್ಯಾಥ್ (ಯು.ಕೆ) ಕರ್ಮಸ್ಥಳ: ಎಪ್ಸಂ & ಸೇಂಟ್ ಹೆಲಿಯರ್ ಆಸ್ಪತ್ರೆ. ಲಂಡನ್

ವೀರಸನ್ಯಾಸಿಗೂಂದು ನುಡಿನಮನ

ಎಂಥ ಕಾಂತಿ, ಏನು ಶಾಂತಿ
ನಿಮ್ಮ ಕಣ್ಣ ನೋಟದಲಿ

ಕೋಟಿ ಸೂರ್ಯ ಸಮಪ್ರಭೆ
ಸಪ್ತ ಋಷಿಯ ಮೊಗದಲಿ

ಎಂಥ ಕೆಚ್ಚು, ಏನು ಶೌರ್ಯ
ನಿಮ್ಮ ಪ್ರತೀ ಮಾತಲಿ

ತಾಯಿ-ತಂದೆ, ಬಂಧ ಹರಿದೆ
ಸುಖದ ಬಾಳು, ಸಂಸಾರ ತೂರೆದೆ

ಗುರುವ ಪಡೆದು, ಕಾವಿ ತೂಟ್ಟೆ
ಜನರ ಪೂರೆವ, ಶಪಥವಿಟ್ಟೆ

ದೇಶ ಪೂರ ನಿಮ್ಮ ಹೆಜ್ಜೆ
ದೇಶದೊರಗೂ ಅದರ ಸದ್ದು

ಲೋಲುಪತೆಯ ಪರದೇಶದಲ್ಲೂ
ನಾಡ ಜನರ ಚಿಂತೆ ನಿಮಗೆ

ಅನ್ನ-ನೀರು,ನಿದ್ರೆ-ಭೋಗ ಎಲ್ಲ ತೃಣ
ಜೀವಾತ್ಮನ ಸೇವೆಯಲಿ

ಪತಂಜಲಿಯ ಮರೆತ ಮಣ್ಣಿನಲ್ಲಿ
ಯೋಗಸೂತ್ರದೊಸಬೆಳೆ

ಭಕ್ತಿ-ಕರ್ಮ, ಜ್ಞಾನಯೋಗ
ಶಕ್ತಿಯಿರೆ, ರಾಜಯೋಗ

ತಾಳ್ಮೆ, ತುಡಿತ, ಅಖಂಡ ಪ್ರೀತಿ
ನೀವು ಕೊಟ್ಟ ಮಹಾಮಂತ್ರ

ಕೀರ್ತಿ, ಕನಕ ಮೋಹ-ದಾಹ
ಜಯಿಸೊ ವಿವೇಕ ನೀಡು ತಂದೆ,
ಯುಗಪುರುಷನ ಕಂದನೇ!

- ಡಾ। ಜಯಕೀರ್ತಿ ರಂಗಯ್ಯ , ಯು.ಕೆ.

*************************************

ಡಾ. ಸವಿತಾ ಕಲ್ಯಾ: ಹುಟ್ಟಿದ್ದು, ಬೆಳೆದಿದ್ದು ಮೈಸೂರಿನಲ್ಲಿ. ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ / ಜೆಎಸ್ಎಸ್ ವೈದ್ಯಕೀಯ ಕಾಲೇಜಿನಲ್ಲಿ ಪದವಿ. ರೈಟ್ ರಾಜ್ಯ ವಿಶ್ವವಿದ್ಯಾಲಯ, ಡೇಟನ್, ಒಹಾಯೊದಲ್ಲಿ  ಆಂತರಿಕ ವೈದ್ಯಕೀಯದಲ್ಲಿ ರೆಸಿಡೆನ್ಸಿ: ಸಂಧಿವಾತಶಾಸ್ತ್ರದಲ್ಲಿ ಫೆಲೋಶಿಪ್: ವಿಸ್ಕಾನ್ಸಿನ್ ವೈದ್ಯಕೀಯ ಕಾಲೇಜು, ಮಿಲ್ವಾಕೀ . ಅರಿಜೋನಾದ ಫೀನಿಕ್ಸ್‌ನಲ್ಲಿರುವ ಕ್ರೈಟನ್ ವಿಶ್ವವಿದ್ಯಾಲಯದೊಂದಿಗೆ ಸಂಯೋಜಿತವಾಗಿರುವ ವ್ಯಾಲಿ ವೈಸ್ ಹೆಲ್ತ್‌ಕೇರ್ ಸೆಂಟರ್‌ನಲ್ಲಿ ಸಿಬ್ಬಂದಿ ಸಂಧಿವಾತಶಾಸ್ತ್ರಜ್ಞರಾಗಿದ್ದಾರೆ. ಹವ್ಯಾಸಗಳಲ್ಲಿ ಪ್ರದರ್ಶನ, ವಿಶೇಷವಾಗಿ ಕನ್ನಡದಲ್ಲಿ ಬರೆಯುವುದು ಸೇರಿವೆ. ಯೂಟ್ಯೂಬ್‌ನಲ್ಲಿ ಇವರು ಬರೆದು,ನಟಿಸಿದ  ” NRI, non respected Indian ” ಹಾಗು ಅಕ್ಕ ನಾಟಕ ಹೆಚ್ಚು ಗುರುತಿಸಲ್ಪಟ್ಟಿವೆ.

ಅರ್ಹತೆಗೆ ಪಟ್ಟ

ಜೀವನ ಚದುರಂಗದಾಟ
ರಾಜನಿಗೆ ಒಂದೇ ಚೌಕದೋಟ
ರಕ್ಷಿಸುವಳು ರಾಣಿ ಆಡಿ ಪರದಾಟ
ಆದರೂ ಕಟ್ಟುವೆವು ರಾಜನಿಗೆ ಪಟ್ಟ

ಪುಟ್ಟಿ ಹುಟ್ಟಿದರೆ ಬೇಡುವೆವು ಪುಟ್ಟ
ಪುಟ್ಟಿಗೆ ಮನೆ ತವರೆಂದು ಮಾಡುವೆವು ಮನದಟ್ಟ
ಹೊರುವಳು ಆಮನೆ ಈಮನೆ ಭಾರದ ಬೆಟ್ಟ
ಆದರೂ ಕುಲೋದ್ಧಾರಕನೆಂಬ ಬಿರುದ ಪುಟ್ಟನೇತೊಟ್ಟ

ಪುಟ್ಟಿ ಮಾತನಾಡಿದರೆ ವಾಯಾಡಿ, ನಲಿದರೆ ವಯ್ಯಾರಿ
ಕೋಪ ತೋರಿದರೆ ಬಜಾರಿ , ಬಾಯಿ ಮುಚ್ಚೆ ರಾಜಕುಮಾರಿ
ಕೆಂಡ ಕಾರಿದರೆ ಕಾಳಿ, ಅನ್ಯಾಯ ವಿರೋಧಿಸಿದರೆ ಮನೆಹಾಳಿ
ಸಹಸ್ರನಾಮದ ನಡುವೆ ಮನಬಿಚ್ಚಿ ಹೇಗೆ ಬಾಳಿಯಾಳು ಹೇಳಿ

ಪುಟ್ಟ ಹುಟ್ಟಿದ್ದಕ್ಕೆ ಜಾಣ, ಅಪ್ಪ ಅಮ್ಮಗೆ ಆಭರಣ
ಮನೆತನದ ಹೆಸರು ಮುಂದುವರೆಸುವ ರಾಮಬಾಣ
ಮಗನ ಹೆರದಿದ್ದರೆ ಕೊರಗುವರು ಇಡೀ ಕುಲವೇ ಭಣಭಣ
ಕಾಲಾನುಕಾಲದಿಂದ ಭೇದಬಗೆಯುತಿದೆ ಸಮಾಜದ ಕಣಕಣ

ಪುಟ್ಟನಂತೆಯೇ ಪುಟ್ಟಿಯೂ ದೇವರ ವರ
ಎತ್ತಾಡಿಸಿ ಪ್ರೋತ್ಸಾಹಿಸಿ ಒಂದೇ ತರ
ಇಡೀ ಕುಲಕೆ ಪುಟ್ಟಿ ನೆರಳನೀಡುವ ಮರ
ಹೊಸ ಜೀವವ ಪೋಣಿಸುವ ಮುತ್ತಿನ ಸರ

ಕಣ್ಣು ತೆರೆದು ತೀರಿಸೋಣ ಪುಟ್ಟಿಯರಿಗೆ ಮಾಡಿದ ನಷ್ಟ
ಭೇದ ತಿಳಿಯದೇ ಮಾಡಿದರು ಸಹಿಸುವುದು ಕಷ್ಟ
ಆರತಿಯೋ ಕೀರುತಿಯೋ ಅವರವರ ಇಷ್ಟ
ಇದ ಮುಂದಿನ ಪೀಳಿಗೆಗೆ ಮಾಡೋಣ ಸ್ಪಷ್ಟ

ಸಮಾನರು ಪುಟ್ಟಿ ಪುಟ್ಟ
ಕಟ್ಟೋಣ ಅರ್ಹತೆಗೆ ಪಟ್ಟ

- ಡಾ। ಸವಿತಾ ಕಲ್ಯಾ, ಯು.ಎಸ್.ಎ

***********************************

ಡಾ. ಮೀನಾ ಸುಬ್ಬರಾವ್: ಮೂಲತಃ ಕಡೂರಿನವರು. ಹುಟ್ಟಿ, ಬೆಳೆದುದೆಲ್ಲಾ  ಕಡೂರು, ನಂತರ ನ್ಯಾಶನಲ್ ಕಾಲೇಜ್ ಬೆಂಗಳೂರು ಮತ್ತು ಮೈಸೂರು ವೈದ್ಯಕೀಯ ವಿದ್ಯಾಲಯಗಳಲಿ ವ್ಯಾಸಂಗ. ಅಮೇರಿಕಾದ ಲಾಸ್ ಆಂಜಲೀಸ್ನಲ್ಲಿ ಮಕ್ಕಳ ಆರೋಗ್ಯ ಶಾಸ್ತ್ರದಲ್ಲಿ ( ಪೀಡಿಯಾಟ್ರಿಕ್ಸ್) ರೆಸಿಡೆನ್ಸಿ ಮುಗಿಸಿ ಸುಂದರವಾದ ಕ್ಯಾಲಿಫೋರ್ನಿಯಾದ ಮಧ್ಯ ಕರಾವಳಿ/ ಸ್ಟೈನ್ಬೆಕ್ ದೇಶ ಎಂದೇ ಹೆಸರಾಗಿರುವ ಮಾಂಟೆರೆ ಪ್ರದೇಶದಲ್ಲಿ ವಾಸ ಮತ್ತು ಮಕ್ಕಳ ತಜ್ಞೆಯಾಗಿ ಸೇವೆ ಸಲ್ಲಿಸುತಿದ್ದಾರೆ. ಕನ್ನಡದಲಿ ಕಥೆ, ಕವನ, ಪ್ರಬಂಧ, ಹಾಸ್ಯ ಮುಂತಾದ ರೂಪಕಗಳ ಬರೆದು ಸಂಪದ, ದಟ್ಸಕನ್ನಡ, ತನುಮನ ಬ್ಲಾಗ್ ಮುಂತಾದ ಜಾಲತಾಣಗಳಲಿ ಪ್ರಕಟಿಸಿದ್ದಾರೆ. ಸುಮಾರು ಭಕ್ತಿಗೀತೆಗಳ ರಚನೆ ಮಾಡಿ ಮೊದಲ 9 – ಹಾಡುಗಳ ಒಂದು ಆಲ್ಬಮ್ ಪುತ್ತೂರು ನರಸಿಂಹ ನಾಯಕರ ಸಂಗೀತ ಸಂಯೋಜನೆ, ಗಾಯನದಲ್ಲಿ ಧ್ವನಿ ಮುಗ್ರಿತವಾಗಿ ಪ್ರಕಟವಾಗಿದೆ. ಕನ್ನಡ ಕೂಟದ ಸಂಚಿಕೆಗಳು, ಕನ್ನಡ ಸಾಹಿತ್ಯ ರಂಗದ ( ಅಮೇರಿಕಾ) ಪುಸ್ತಕಗಳಲ್ಲೂ ಲೇಖನ, ಕಥೆಗಳು ಮತ್ತು ಇತರೆ ಬರಹಗಳು ಪ್ರಕಟವಾಗಿವೆ.

ಒಲವು!! (ದಿವ್ಯ ಅನುರಾಗ)

ಒಲಿದೆ ನೀನು ಒಂದು ಕ್ಷಣಕೆ ನನ್ನ ಬಾಳ ಪಥದಲಿ
ನಡೆದೆ ನಾನು ಅದರ ಮೇಲೆ ನನ್ನ ಬಾಳ ರಥದಲಿ!

ಸವಿನೆನಪು ಸಾಕೊಂದು ಬಾಳಿನಾ ಅರ್ಥಕೆ
ಸವಿಯುತಿರೆ ಸಾಗಿಹುದು ಬದುಕಿನಾ ಪತಾಕೆ!

ಆ ಮಧುರ ಅನುಭವವು ಅಮರವಾಗಿದೆ ಮನಕೆ
ಆ ಅಧರ ಅದರುವಿಕೆ ಅರಸುತಿದೆ ಜೀವಕೆ!

ಬರದಿರಳು ನಿದಿರೆಯು ನಿನ್ನಂದ ನೆನೆಯದೆ
ಹಗಲಿರುಳು ಸಾಗದು ಮಕರಂದ ಸವಿಯದೆ!

ಎಲ್ಲಿ ನೋಡಿದರಲ್ಲಿ ನೀ ನನ್ನ ನೋಟವಾಗಿರುವೆ
ಏನು ಮಾಡಿದರೂ ನೀ ನನ್ನ ಆಟವಾಗಿರುವೆ!

ನೀ ನಡೆಸುತಿರುವೆ ಬದುಕನು ಬರಡಾಗಿಸದೆ
ನೀ ಬಡಿಸುತಿರುವೆ ಅರಿವನು ಬರಿದಾಗಿಸದೆ!

ಮತ್ತೊಮ್ಮೆ ಬಾ ನೀನು ಭವ್ಯ ಭಾವಗಳ ಹೊತ್ತು
ಇನ್ನೊಮ್ಮೆ ಕೊಡು ನೀನು ದಿವ್ಯ ಅನುರಾಗದ ತುತ್ತು!

ನಗುತಿರು ಎಂದೆಂದೂ, ಬರಲಿ ಏನೊಂದು
ಸಾಗುತಿರು ಬಾಳಿನಲಿ ಬರಲಿ ನೂರೊಂದು

ನುಡಿದೆ ಈ ದಿವ್ಯ ವಾಣಿಯ ನೀನಂದು ಬಿಡಿಸಿ ಮನದಾಳದ ಚಂಚಲತೆಯ ಚೆಂಡು

- ಡಾ. ಮೀನಾ ಸುಬ್ಬರಾವ್.

***********************************************

ಲಹರಿ- ಕಾಡುವ ಘಮಗಳ ಗುಂಗಿನಲ್ಲಿ,

ಚಿತ್ರಕೃಪೆ; ಗೂಗಲ್
ಕಾಡುವ ಘಮಗಳು 

ಮನುಷ್ಯನಿಗೆ ದೇವರು ಕೊಟ್ಟ ಮಹತ್ತರ ಉಡುಗೊರೆ ಮೂಗು. ಅದಿಲ್ಲದೆ ನಾವು ಹೇಗೆ ಉಸಿರಾಡುತ್ತಿದ್ದೆವು ಅನ್ನುವ
ಮೂಲಭೂತ ಪ್ರಶ್ನೆಗೂ ಮೊದಲು, ಪ್ರಕೃತಿಯ ಅದೆಷ್ಟೋ ಸ್ವಾರಸ್ಯ ನಮ್ಮ ಅರಿವಿಗೆ ಬರುತ್ತಿರಲಿಲ್ಲವೇನೋ ಬಂದರೂ
ಅದು ದೀರ್ಘಕಾಲ ನೆನಪಲ್ಲಿ ಉಳಿಯುವುದು ಕಷ್ಟ ಇತ್ತೇನೋ ಅನ್ನುವ ಯೋಚನೆ ಒಮ್ಮೆಲೇ ಮಿಂಚಿಮಾಯವಾಗುತ್ತದೆ. ಅದಕ್ಕಂತಲೇ ದೇವರಿಗೆ Special thanks ಹೇಳಲೇ ಬೇಕು.
ನಮಗೆ ಉಸಿರಾಡಲು,ಆಘ್ರಾಣಿಸಲು,ಮುಖಕ್ಕೊಂದು ಮೂಗು ಕೊಟ್ಟಿರುವುದಕ್ಕೆ! ಮೂಗಿರುವುದರಿಂದಲೇ ಅಲ್ವೇ ಪ್ರತಿಯೊಂದು ಘಟನೆ
ಪ್ರತಿಯೊಬ್ಬ ವ್ಯಕ್ತಿ, ಹೂವು, ಪ್ರಾಣಿ ಸ್ಥಳಗಳು .ಕೆಲವೊಮ್ಮೆ ಘಟನೆಗಳು ಘಮಗಳೊಂದಿಗೆ ಬೆಸೆದು ಮನಸಿನಲ್ಲಿ ಅಳಿಸದ ಹಚ್ಚೆಯಂತೆ ಅಚ್ಚಾಗಿ
ಬಿಡುವುದು?

ಕೆಲವರಿಗೆ ಈ ಘಮ, ವಾಸನೆ, ಕಂಪು, ಪರಿಮಳಗಳು ಅಷ್ಟಾಗಿ ಕಾಡಿರಲಿಕ್ಕಿಲ್ಲ. ಅಥವಾ ಹಲವರು ಆ ಬಗ್ಗೆ ಯೋಚಿಸಿಯೇ ಇರಲಿಕ್ಕಿಲ್ಲ. ಆದರೆ ಭೂಮಿಯ ಮೇಲೆ ಒಂದಷ್ಟು ಜನ ನನ್ನಂಥವರೂ ಇರುತ್ತಾರೆ. ಘಮದ ಗುಂಗಿನಲ್ಲಿ ಬದುಕುವವರು.ಬುದ್ಧಿ ಕೊಟ್ಟನೋ ಇಲ್ವೋ ದೇವರು, ಮೂಗು ಮತ್ತು ಕಣ್ಣು ಮಾತ್ರ ಸಿಕ್ಕಾಪಟ್ಟೆ ಚುರುಕಾಗಿರಲಿ ಎಂದು ಹರಸಿಬಿಟ್ಟ.

ಸಾರಿನಲ್ಲಿ ಅಪ್ಪಿತಪ್ಪಿ ಜೀರಿಗೆ ಜೊತೆಗೆ ಎರಡು ಕಾಳು ಮೆಂತ್ಯೆ ಹವೀಜ ಬಿದ್ದರೂ ಸಾಕು ರುಚಿ ನೋಡುವ ಮೊದಲೇ ನಾ ಅಮ್ಮನಿಗೆ ಹೇಳಿ ಬಿಡುತ್ತಿದ್ದೆ. ಈ ವಿಷಯಕ್ಕೆ ಮಾತ್ರ ನನಗೂ ಅಮ್ಮನಿಗೂ ಆಗೀಗ ಜಗಳ ಆಗತಿತ್ತು. ಊಟಕ್ಕೆ ಕೂಡುವಾಗ ಉಪ್ಪಿನಕಾಯಿ ದಿಟ್ಟಿಸಿದೆ ಎಂದರೆ ಎಲ್ಲಿ ಊಟದ ನಡುವೆ ಹುಳ ಗಿಳ ಅಂದು ಬಿಡುವೆನೋ ಅಂತ ಆಕೆಗೆ ಆತಂಕವಾಗತಿತ್ತು. ಯಾರಿಗೂ ಕಾಣದ್ದು, ಯಾರ ಮೂಗಿಗೆ ನಿಲುಕದ್ದು ಅದು ಹೇಗೆ ನನಗೇ ಕಾಣಿಸುತ್ತಿತ್ತೋ, ನನ್ನ ಮೂಗಿಗೆ ಅಡರುತಿತ್ತೋ ಆ ದೇವರೇ ಬಲ್ಲ.

ಊಟದ ವಿಷಯ ಮಾತ್ರವಲ್ಲ ಈ ಘಮ ಮತ್ತು ಅದನ್ನು ನೆನಪಿಟ್ಟು ಆ ಜಾಗೆ, ವ್ಯಕ್ತಿ,ಘಟನೆಯೊಂದಿಗೆ ಚಂದದಲ್ಲಿ ಮಿದುಳಿನ ಅದ್ಯಾವ ಡ್ರೈವ್ ನಲ್ಲಿ save ಮಾಡಿ ಕೊಂಡಿದೆಯೋ ಈ ಮನಸು ಮೂಗು. ಕಣ್ಣು ಮುಚ್ಚಿ ಧ್ಯಾನಿಸಿದರೆ ಆ ಘಮ ತನ್ನಿಂತಾನೇ ಫೋಟೋ ಆಲ್ಬಂ ತರಹ ತೆರೆದುಕೊಳ್ಳುತ್ತದೆ. ಯಾವಾಗಲೋ ಇಂಥದ್ದೊಂದಿಷ್ಟು ನನ್ನ ಕಾಡುವ ಘಮಗಳನ್ನು ಪಟ್ಟಿ ಮಾಡಿಟ್ಟಿದ್ದೆ. ಅವನ್ನು ಇಲ್ಲಿ ಇಂದು ಬರೆಯೋಣ ಅನ್ನಿಸಿತು.

ಮೊದಲ ಮಳೆ
ಇದು ಎಲ್ಲರಿಗು ಆಗಿರೋ ಅನುಭವ. ಮೊದಲ ಮಳೆ ಬಂದಾಗ ಬರೊ ಹಸಿಮಣ್ಣ ವಾಸನೆ. ಎಲ್ಲರಿಗೂ ಈ ಘಮದೊಂದಿಗೆ ಅಪರೂಪದಲ್ಲಿ ಅಪರೂಪದ ನೆನಪುಗಳಿರಬಹುದು. ನನಗೆ ಈ ಕಂಪು ನೆನಸಿಕೊಂಡರೆ,ನಾವು ಸಿರಸಿ ರಸ್ತೆಯ ನಮ್ಮ ಆ ಹಳೇ ಮನೆಯಲ್ಲಿರುವಾಗ, ಸೋರುತ್ತಿದ್ದ ಮಾಡು ಮೇಲಿಂದ ಬೀಳುವ ನೀರ ಹನಿಗಳನ್ನು ನೇರವಾಗಿ ತನ್ನೆಡೆಗೆ ಸೆಳೆದುಕೊಳ್ಳುತ್ತಿದ್ದ ಅಲ್ಯೂಮಿನಿಯಂ ಪಾತ್ರೆಗಳು. ಅದೇ ಸಮಯಕ್ಕೆ ಅಮ್ಮ ಮಾಡಿ ಕೊಡುತ್ತಿದ್ದ ಸಬ್ಬಸಿಗೆ ಪಲ್ಯ, ಅಕ್ಕಿರೊಟ್ಟಿ. ಕೆರೆಮೀನಿನ ಸಾರು ಮಡಕೆಯಲ್ಲಿ ಕುದ್ದ ಘಮ. ಮಳೆ ನಿಂತ ಮೇಲೆ ಹಿತ್ತಲಲ್ಲಿ
ಬರುತ್ತಿದ್ದ ಕಂಚಿ ಹೂವಿನ ವಿಲಕ್ಷಣ ಘಮ ಉಪ್ಪುನೀರನಲ್ಲಿ ಹಾಕಿಟ್ಟ ಕಳಿಲೆ,ಹಲಸಿನ ತೊಳೆ,ಮಾವಿನಕಾಯಿ ,ಅಡಿಗೆಗಳು ಅದಕ್ಕೊಂದು ತೆಂಗಿನೆಣ್ಣೆ ಬೆಳ್ಳುಳ್ಳಿ ಒಗ್ಗರಣೆ.ಆಹ್ಹ್ ! ಆ ಮಳೆ ಘಮ ಹೀರದೆ ಅದೆಷ್ಟೋ ಕಾಲವಾಯಿತು.ಪ್ಯಾಟ್ರಿಕೋರ್ ಅನ್ನುವ ಮಳೆ ಮಣ್ಣಿನ ಘಮದ ಅತ್ತರು ಮಾರುಕಟ್ಟೆಗೆ ಬಂದಿದೆಯಂತೆ. ಅದನ್ನೊಮ್ಮೆ ಕೊಂಡು ತರಬೇಕು.

ದೇವಿಮನೆ ಘಟ್ಟ.
ಅದು ನೆನಪಾಗೋದೆ ಅದರ ಕಾಡು ಹೂಗಳ ಘಮದಿಂದ. ಶಿರಸಿ ಮತ್ತು ಕುಮಟೆ ಪೇಟೆ ಗಳನ್ನೂ ಸೇರಿಸುವ
ಈ ಘಟ್ಟದ ತಿರುವು ಮುರುವು ೬೬ ಕಿಲೋಮೀಟರ್ ಕಾಡಿನ ಹಾದಿ ಬರಿ ಹಸಿರು ನೋಡುತ್ತಾ, ಕಾಡು ಹೂಗಳ ಪೇರಳೆ,ಕಿತ್ತಳೆ ಹಣ್ಣುಗಳ ಘಮದ ಗುಂಗಿನಲ್ಲಿ ಕಳೆದು ಬಿಡುತ್ತಿದ್ದೆ. ಇನ್ನೇನು ಅಘನಾಶಿನಿ ಬಂದೆ ಬಿಡ್ತಾಳೆ. ಆಕೆಯ ಮತ್ತುಶರಾವತಿ ನದಿಯ ಹೆಸರನ್ನು ಕೇಳಿದ ಕೊಡಲೇ ನೆನಪಾಗೋದು ಹಸಿ.ತಾಜಾ ಮೀನಿನ ಘಮ.ಜೊತೆಗೆ ಕೆಂಪು ಮಣ್ಣು(ಮೀನುತಿನ್ನದವರಿಗೆ ಈ ಘಮದ ಭಾಗ್ಯ ಇಲ್ಲ ಮೂಗಿಗೆ ಕರವಸ್ತ್ರ). ಕುಮಟೆಯ ಬಸ್ಸ್ ನಿಲ್ದಾಣದಲ್ಲಿ ಮಾರಲು ಬರುತ್ತಿದ್ದ ಹಾಲಕ್ಕಿ ಒಕ್ಕಲತಿಯರ ಬಟ್ಟಿಯಲ್ಲಿದ್ದ ಜಾಜಿ,ಬಕುಲಾ,ಸುರಗಿ ಕಂಪು. ಜೀವ ಇರುವ ಒರೆಗೂ ಈ ನೆನಪ ಘಮ ಶಾಶ್ವತ.

ಮಂಗಳೂರು ಮಲ್ಲಿಗೆ.
ಈ ಘಮ ಎಂದಕೂಡಲೇ ನೆನೆಪಗೋದು ದಕ್ಷಿಣಕನ್ನಡ ಸೀಮೆಯ ಮದುವೆಗಳು. ದರ್ಶನ, ದೈವದಮನೆ,ಬೇಸಿಗೆಯ ಧಗೆಯಲ್ಲೂ ಬೆವರ ಧಾರೆ ಹರಿಸುತ್ತಲೇ, ಜಗಮಗಿಸುವ ಸೀರೆ ಉಟ್ಟು, ಚಿನ್ನ ಧರಿಸಿದ ಭಗಿನಿಯರೂ, ಬಸ್ಸಿಗೆ ಕಾದು ಜನ ಜಂಗುಳಿಯಲ್ಲಿ ಅಡೆಗೋ ನಿಲ್ಲಲು ಒಂದು ಜಾಗ ಸಿಕ್ಕಾಗ ನೂರಾರು ಪರ್ಫ್ಯೂಮ್ ಗಳು ಬಸ್ಸಿನಲ್ಲಿ ಮಾತಿಗಿಳಿದಿವೆಯೇನೋ ಅನ್ನಿಸುವ ಮರುಗಳಿಗೆ ಮದುವೆ ಹಾಲ್ ತಲುಪಿ,
ಭೋಜನ ಮುಗಿಸಿ ಊಟದ ಬಗ್ಗೆ ಸಾರಿಗೆ ಉಪ್ಪು ಕಮ್ಮಿ ಪಾಯಶಕ್ಕೆ ಬೆಲ್ಲ ಜಾಸ್ತಿ ಅಂದು ಕಾಮೆಂಟ್ ಒಗೆದು ಬರುವ ಆಮಂತ್ರಿತರು.
ಚಿಕ್ಕವರಿದ್ದಾಗ ತಲೆತುಂಬ ಮಲ್ಲಿಗೆ ಮುಡಿಸಿಕೊಂಡು ಕನ್ನಡಿಯ ಮುಂದೆ ನಿಂತು ಫೋಟೋ ತೆಗೆಸಿಕೊಂಡಿದ್ದು ನೆನಪಾಗುತ್ತದೆ. ಒಣಗಿ ಹೋದರೂ ಘಮ ಬಿಡದ ಆ ಮಲ್ಲಿಗೆಯ ಗುಣಗಾನ ಮಾಡಿದಷ್ಟೂ ಕಡಿಮೆ.


ಊದಬತ್ತಿ (ಅಗರಬತ್ತಿ)
ಕೆಲವು ಅಗರಬತ್ತಿಗಳು ಎಷ್ಟು ಮರೆತರು ಆ ಘಟನೆ ಯೊಂದಿಗೆ ನೆನೆಪಿನಲ್ಲೇ ಘಮಘಮಿಸುತ್ತವೆ. ಚವತಿ ಹಬ್ಬದಂದು ಪಪ್ಪ ಅದ್ಯಾವುದೋ ಸಿಟ್ಟಿನಲ್ಲಿ ನನಗೂ ತಂಗಿಗೂ ಹೊಡೆದದ್ದು.ಪರೀಕ್ಷೆ ಹೊತ್ತಿಗೆ ಹುಷಾರುತಪ್ಪಿ ಆಸ್ಪತ್ರೆಯ ಅತಿಥಿ ಆಗಿದ್ದು. ಆ ಸಮಯದಲ್ಲಿ ಮನೆಯಲ್ಲಿ ಹೆಚ್ಚುತ್ತಿದ್ದ ಆ ಊದಬತ್ತಿಯ ಘಮ ಈಗ ಆಘ್ರಾಣಿಸಿದರೂ, ನೆನಪಿಸಿಕೊಂಡರೂ ಮತ್ತೆ ವಾಕರಿಕೆ ಬರುವುದಂತೂ ನಿಜ.


ಕಾಫಿ ಘಮ
ಇವರೂಂದಿಗೆ ಹಸಿದ ಹೊಟ್ಟೆಯಲ್ಲಿ ಬೆಂಗಳೂರು, ಲಾಲಬಾಗ್ ಸುತ್ತಾಡಿ ಕೊನೆಯಲ್ಲಿ ನಾಚಿ ನಾಚಿ ಹಸಿದ ವಿಷಯ ಹೇಳಿ ಅಕ್ಕಿರೊಟ್ಟಿ ತಿಂದಿದ್ದು. ಎದೆತುಂಬಿ ಹಾಡುವೆನು,ಎಂದೂ ಮರೆಯದ ಹಾಡು,ಮನತುಂಬಿ ಹಾಡುವೆನು ಕಾರ್ಯಕ್ರಮಗಳ ಚಿತ್ರೀಕರಣ. ಅಲ್ಲಿ ಪುಟ್ಟ ಲೋಟದ ತುಂಬ ಕೊಡುತ್ತಿದ್ದ ಆ ಸಕ್ಕರೆಪಾಕದಂತಿದ್ದ ಕಾಫಿ ಘಮ.. ಕಾಫಿ ಎಂದರೇ ಬೆಂಗಳೂರು ಅನ್ನಿಸುವಂತೆ ಮಾಡಿದೆ. ಒಗ್ಗರಣೆ ಮಧ್ಯಾನ್ಹ ಹೊತ್ತು ಆಕಾಶವಾಣಿ ಬಿತ್ತರಿಸುವ ೮೦ ರ ದಶಕದ ಹಾಡುಗಳು.ಮತ್ತು ಕುಂದಾಪುರದ ಕೋಣಿಯಲ್ಲಿ ಅಜ್ಜಿ ಕೊದ್ದೆಲ್ ಮತ್ತು ಬಟಾಟೆ ಪದಾರ್ಥಕ್ಕೆ ಹಾಕುತ್ತಿದ್ದ ಬೆಳ್ಳುಳ್ಳಿ ಒಗ್ಗರಣೆ ಘಮ.ಈಗಲೂ ಆ ಹಾಡುಗಳನ್ನು ಕೇಳಿದಾಗ ಆ ಹಿತವಾದ ಘಮ ಅಜ್ಜಿ ಮನೆ ನನ್ನ ಮುದ್ದಿಸಿ ಅಟ್ಟಕ್ಕೇರಿಸಿ ಇಟ್ಟಿರುವ ಅಜ್ಜಿ ನೆನಪಾಗಿ ಬಿಡುತ್ತಾರೆ.

ದುಂಡುಮಲ್ಲಿಗೆ
ಅದು ಯಾವಕಾಲದಲ್ಲೂ ನನಗೆ ನೆನಪಾಗಿ ಕಾಡುವುದು. ಹಳೆಮನೆಯ ಹಿತ್ತಲಲ್ಲಿ ಹಬ್ಬಿದ್ದ ಹಂದರದಲ್ಲಿ ಬಿಳಿ ಚಿಕ್ಕೆಗಳಂತೆ ತಾಮುಂದು ನಾ ಮುಂದು ಎಂದು ಅರಳುತ್ತಿದ್ದವು ಅವು. ಬೇಸಿಗೆಯ ಬಿಸಿಗಾಳಿ ಅದರೊಂದಿಗೆ ದುಂಡುಮಲ್ಲಿಗೆಯ ಘಮ. ತುಳಸಿ ಕಟ್ಟೆಯಮೇಲೆ ಕುಳಿತು ಬೆಳದಿಂಗಳ ಬೆಳಕಲ್ಲಿ ನನ್ನ ಉದ್ದ ಕೂದಲ ನೆರಳು ನೋಡಿ ಖುಷಿ ಪಡುವ ಕ್ಷಣ. ಅಂಗಳದಲ್ಲಿ ಕೂತು ಬೆಳದಿಂಗಳೂಟ ಮಾಡುವ ಆ ಉಮೇದಿಯ ದಿನಗಳು. ಈಗ ಹಳೆ ಮನೆಯೂ ಇಲ್ಲ ಮಲ್ಲಿಗೆ ಹಂದರವೂ ಇಲ್ಲ. ಘಮ ಮಾತ್ರ ಹಾಗೆ ಉಳಿದು ಹೋಗಿದೆ.

ಅತ್ತರು
ಆಕೆಯ ಹೆಸರು ಡಯಾನಾ ಉತ್ತರಕನ್ನಡದ ಕೊಂಕಣಿಗರ ಸಂಸ್ಕೃತಿಯ ಬಗ್ಗೆ PhD ಅಧ್ಯಯನ ಮಾಡುತ್ತಿದ್ದಳು.ನಮ್ಮ
ಮನೆಗೆ ಸುಮಾರು ದಿನ ವಿಷಯ ಸಂಗ್ರಹಣೆ ಕ್ಷೇತ್ರಕಾರ್ಯ ಸಂದರ್ಶನಮಾಡಲು ಬಂದಿದ್ದಳು. ನಾನಿನ್ನೂ ಆಗ ೩ನೇ ತರಗತಿಯಲ್ಲಿದ್ದೆ. ಕಣ್ಣುಮುಚ್ಚಿಯೂ ಮನೆ ಬಾಗಿಲಿಗೆ ಬಂದವರು ಅವರೇ ಎಂದು ನಾನು ಹೇಳುತ್ತಿದ್ದೆ, ಕಣ್ಣಿಗಿಂತ ನನ್ನ ಮೂಗು ಆಕೆಯನ್ನು, ಆಕೆ ಹಾಕಿಕೊಳ್ಳುತ್ತಿದ್ದ
ಒಂದು ಸುಗಂಧದ್ರವ್ಯದಿಂದ ಇಂದಿಗೂ ನೆನಪಿಟ್ಟುಕೊಂಡಿದೆ.

ಮಗುವಿನ ಘಮ
ನನ್ನ ಬದುಕಲ್ಲಿ ಮೊದಲು ನೋಡಿದ ಮಗು ಅದು. ನನ್ನ ಸುಲೋಚನ ಅತ್ತೆಯ ಮೊದಲ ಮಗು. ಅದರ ಮುದ್ದು ಕೈಗಳು ಕೆಂಪುಗಟ್ಟಿದ ಕಾಲು,ಮಗು ಎಂದರೆ ಜೀವವಿರುವ ಗೊಂಬೆ ಅನಿಸಿತ್ತು. ಎಲ್ಲಕ್ಕಿಂತ ಹೆಚ್ಹಾಗಿ ಅದರ ಹತ್ತಿರ ಬರುತ್ತಿದ್ದ ಬೇಬಿ ಪೌಡರ್ ಘಮ,ಮೈಗೆ ಹಚ್ಹುವ ಕೆಂಪು ಬೇರಿನ ಎಣ್ಣೆಸ್ನಾನ ಮಾಡಿ ಬಂದ ನಂತರ ಹಾಕುವ ಲೋಭಾನ ಗಂಧದ ಸಾಣೆಯಲ್ಲಿ ತೇಯುವ ಬಜೆ ಬೇರಿನ ಪರಿಮಳ ಎಳೆಮಗು ನನಗೆ ನೆನಪಾಗೋದೆ ಆ ಘಮ.

ಮಾವಿನಕಾಯಿ,
ನೆನಪು ಬಂತೆಂದರೆ ಸಾಲಾಗಿ ನೆನಪಾಗೋದು ವಾರ್ಷಿಕ ಪರೀಕ್ಷೆಗಳು,ಯುಗಾದಿ,ಆಲೀಕಲ್ಲ ಮಳೆ, ಗೆಳೆಯರೊಂದಿಗೆ ನೀರು
ಇಂಗುತ್ತಿರುವ ಹೊಂಡ ಕೆರೆಗಳಿಗೆ ಮೀನು ಹಿಡಿಯಲು ಹೋಗುವುದು ಕಪ್ಪೆಮರಿಗಳನ್ನ ತಂದು ಮನೆಯ ನೀರಿನ ತನಕ ನಲ್ಲಿ ಹಾಕುವುದು. ಮಾವಿನ ಸೊನೆ ಪುಟ್ಟ ಬಾಟಲಿಯಲ್ಲಿ ಸಂಗ್ರಹಿಸಿಟ್ಟು ಆಗೀಗ ಅದನ್ನು ತಂಬಳಿ ಮಾಡಲು ಬಳಸುವುದು ಜೊತೆಗೆ
ಆ ಸೀಜನ್ನಲ್ಲಿ ಪ್ರತಿದಿನ ಕಡ್ಡಾಯ ಎಂಬಂತೆ ಮಾಡುವ ಮಾವಿನಕಾಯಿ ಅಡುಗೆಗಳು.

ನನಗೆ ಈ ಕಾರಣಕ್ಕೆ ಹ್ಯಾರಿ ಪೊಟರ್ ಮತ್ತು Hogwarts School of Witchcraft and Wizardry ನಿಜವಾಗಿಯೂ ಇರಬಾರದಿತ್ತೆ? ಎಂದು ತೀವ್ರವಾಗಿ ಅನಿಸುವುದುಂಟು. ನನಗೆ ಹೆಚ್ಚೇನು ಬೇಡಿತ್ತು ಬೇಕೇನಿಸಿದಾಗೆಲ್ಲ ಈ ನನಪುಗಳನ್ನ, ಘಮಗಳನ್ನ ಫೋಟೋ ಆಲ್ಬಂ ನಂತೆ ಮತ್ತೆ ಮತ್ತೆ ಮುಟ್ಟಿ ತಟ್ಟಿ ನೋಡಿ ಮತ್ತೆ ಮತ್ತೆ ಆಘ್ರಾಣಿಸುವಂತೆ ಮಾಡುವ ಒಂದೆರಡು spells ಕಲಿಸಿಬಿಟ್ಟರೆ ಸಾಕಿತ್ತು.
ಈ ಘಮಗಳ ಕಥೆ ಮುಗಿಯುವಂಥದ್ದಲ್ಲ ಹೇಳಿದರೆ ಹೇಳುತ್ತಲೇ ಹೋಗಬಹುದು, ಮನೆಗೊಂದು ಘಮ. ಒಲಿದ ಮನಸಿಗೊಂದು ,ಮುನಿದ ಮನಸಿಗೆ ಮತ್ತೊಂದು ಘಮ. ಓಲೈಕೆಗೆ ಇನ್ನೊಂದು ಘಮ ಹೀಗೆ ಬದುಕೆಲ್ಲ ಘಮದ ಸೆರಗಲ್ಲಿನೆನಪಿನ ಘಮದಲ್ಲಿ.

- ಅಮಿತಾ ರವಿಕಿರಣ್