ಎಳ್ಳೆಣ್ಣೆಯ ಎರಡು ದೀಪ.
_ ಡಾ. ದಾಕ್ಷಾಯಿಣಿ ಗೌಡ
ಈ ಬಾರಿ,ಹೊಸ ಪರಿಯ ಕಳಕಳಿ
ನಮ್ಮ ನಿಮ್ಮೆಲ್ಲರ ಈ ದೀಪಾವಳಿ
ನಮ್ಮೂರಲ್ಲಿ, ಗೃಹಜ್ಯೋತಿಯ ಆಗಮನ,
ಆದರೇನು, ಯೂನಿಟ್ನ ಮಿತಿಮೀರದೆಡೆ ಗಮನ
ಸಾಮಾನ್ಯರಿಗೆ ಎಣ್ಣೆ ಬಲು ದುಬಾರಿ,
ಸರ್ಕಾರದ ಖರ್ಚಿನಲ್ಲಿ ಕೋಟಿ ದೀಪಗಳ ಅದ್ದೂರಿ.
ಮನೆಮುಂದೆ ಮಿನುಗುತ್ತಿದೆ ಎಳ್ಳೆಣ್ಣೆಯ ಎರಡು ದೀಪ.
ಈ ಊರಲ್ಲೂ ಬಗ್ಗುತ್ತಿಲ್ಲ ಹಣದುಬ್ಬರ
ಕೈಗೆಟುಕದು ಬಡತನಕೆ ವಿದ್ಯುತ್ ದರ.
ಬಿಸಿ ಊಟ, ಬಿಸಿಗಾಳಿ ಆಶಿಸುವ ಎದೆ, ಉದರ,
ಎಚ್ಚರಿಕೆ, ಕೂಗುತಿದೆ, ಹಿಮಗಾಳಿಯ ಅಬ್ಬರ.
ಮನೆಮುಂದೆ ಮಿನುಗುತ್ತಿದೆ ಎಳ್ಳೆಣ್ಣೆಯ ಎರಡು ದೀಪ.
ಕಾಂಚಾಣ ಕುಣಿಸಿದಂತೆ ಆಡುವ, ತೂಗುವ ಬೆಳಕು,
ಗಗನ ಕುಸುಮ, ಬಡತನಕೆ, ಬಹುದೀಪಗಳ ಥಳುಕು.
ಲಕ್ಷದೀಪವಿರಲಿ, ಕಗ್ಗತ್ತಿನ ಕತ್ತಲಿರಲಿ ಹೊರಗೆ,
ಮಿನುಗಲಿ ನಿಮ್ಮ ನಮ್ಮೊಳಗೆ ಆನಂದದ ದೀಪ,
ಹೊಸಬಗೆಯ ಬೆಳಕಲಿ, ಬೆಳಗಲಿ ನಮ್ಮ ಸೃಷ್ಟಿಯ ದ್ವೀಪ.
ಅನಬೆಲ್ಲ ಹೇಳಿದ ಅಮರಾಂತೆ ಕಥೆ - ಡಾ.ಮುರಳಿ ಹತ್ವಾರ್
ಅಮರಾಂತೆ ಪೋರ್ಚುಗಲ್ಲಿನ ಒಂದು ಸಣ್ಣ ಊರು. ಅದರ ಮಧ್ಯದಲ್ಲೊಂದು ನದಿ, ಅದರ ಹೆಸರು ತಮೆಗಾ. ಡ್ಯುರೋ ನದಿಯ ಉಪನದಿಯಾದ ಇದರ ಒಂದು ಕಡೆ ಈಗ ಹೊಟೇಲಾಗಿರುವ ಹಳೇ ಕಾಲದ ಶ್ರೀಮಂತನ ಬಂಗಲೆ ಮತ್ತದರ ಸುತ್ತ ಬೆಳೆದ ಮನೆಗಳು, ಅಂಗಡಿಗಳು ಇತ್ಯಾದಿ. ಇನ್ನೊಂದು ಕಡೆ, ಸಂತ ಗೋನ್ಸಾಲನ ಇಗರ್ಜಿ ಮತ್ತದರ ಹಿಂದೆ ಯಾವತ್ತೋ ಇದ್ದ ಕಾಡನ್ನು ಮರೆಸಿ ಬೆಳೆದ ಊರು. ಮಧ್ಯದಲ್ಲೊಂದು ಅವೆರಡನ್ನೂ ಸೇರಿಸುವ ಹಳೆಯ ಬ್ರಿಡ್ಜ್ . ಸುಮಾರು ೭೦೦ ವರ್ಷದ ಹಿಂದೆ ಇದ್ದ, ಮೊದಲು ಪಾದ್ರಿಯಾಗಿ, ಆಗಾಗ ಪವಾಡ ಮಾಡಿ, ದೊಡ್ಡ ಮೊನಾಸ್ಟರಿಯೊಂದನ್ನು ಕಟ್ಟಿ, ಕಡೆಗೆ ಸಂತರಾದ ಗೋನ್ಸಾಲರ ಇಗರ್ಜಿಯ ಅಮರಾಂತೆ ಈಗ ಪೊರ್ಟೊ ನಗರದಿಂದ ಡ್ಯುರೋ ಕಣಿವೆಗೆ ಮುಂಜಾನೆ ಹೊರಟು ಸಂಜೆಗೆ ಮರಳುವ ಪ್ಯಾಕೇಜ್ ಟೂರಿಗರಿಗೆ ಮೊದಲು ಸಿಗುವ ಸ್ಟಾಪ್.
ಪೊರ್ಟೊ ದಲ್ಲಿ ಮುಂಜಾನೆ ಎಂಟಕ್ಕೆ ಟೂರಿನ ಮಿನಿ ಬಸ್ ಆಫೀಸಿಗೆ ವಿಧೇಯ ವಿದ್ಯಾರ್ಥಿಗಳಂತೆ ಅರ್ಧ ಗಂಟೆ ಮುಂಚೆಯೇ ತಲುಪಿದ್ದ ನಮಗೆ, ಅಲ್ಲಿನ ಏಜೇಂಟ್ ಒಬ್ಬ ನಮ್ಮ ಬಸ್ ನಂಬ್ರ ೧೯ ಮತ್ತು ಗೈಡ್ ಅನಬೆಲ್ಲ ಎಂದು ಪ್ರಿಂಟಾದ ಚೀಟಿ ಕೊಟ್ಟ. ಅದಾಗಿ ಸ್ವಲ್ಪ ಹೊತ್ತಿಗೆ ಆ ಬಸ್ಸು ಮತ್ತದರೊಟ್ಟಿಗೆ ಬಂದಿಳಿದ ಮಧ್ಯ ವಯಸ್ಸಿನ ಸ್ಥೂಲ ಕಾಯದ ಅನಬೆಲ್ಲ, ಗಟ್ಟಿ ದನಿಯಲ್ಲಿ ಬಸ್ಸಿನ ನಂಬ್ರ ಮತ್ತೆ ಹೊರಡುವ ಟೈಮನ್ನು ಮೊದಲು ಇಂಗ್ಲಿಷಿನಲ್ಲೂ ನಂತರ ಫ್ರೆಂಚಿನಲ್ಲೂ ಕೂಗಿ, ಆ ಕರೆಗೆ ಕಾದವರಂತೆ ಗಡಿಬಿಡಿಯಲ್ಲಿ ಅನಬೆಲ್ಲ ಸುತ್ತ ಸೇರಿದ ಜನರನ್ನ ಬಸ್ಸೇರಿಸಿ, ಕಡೆಗೆ ತಾನೂ ಹತ್ತಿ ಮುಂದಿನ ಸೀಟಿನಲ್ಲಿ ಕುಳಿತು, ಕೈಗೊಂದು ವಯರಿನ ಮೈಕೆಳೆದುಕೊಂಡು ಮಾತು ಶುರುಮಾಡಿದಳು.
ಅವಳ ಮಾತುಗಳು ರೆಕಾರ್ಡೆಡ್ ಟೇಪಿನಂತೆ ಇಂಗ್ಲಿಷ್-ಫ್ರೆಂಚ್ ತಾಳದಲ್ಲಿ ಬಸ್ಸಿನ ಕಿಟಕಿಯಾಚೆ ಕಾಣುವ ಐತಿಹಾಸಿಕ ಕಟ್ಟಡಗಳು, ಬ್ರಿಡ್ಜುಗಳು, ಸುರಂಗಳು ಅವನ್ನೆಲ್ಲ ಆದಷ್ಟು ಕಡಿಮೆ ಶಬ್ದಗಳಲ್ಲಿ ಹೇಳುತ್ತಾ, ಮಧ್ಯೆ ಮಧ್ಯೆ ನಗೆ ತಾರದ ಜೋಕುಗಳನ್ನು ಉರುಳಿಸುತ್ತಾ, ಆದಷ್ಟು ಮೊಬೈಲ್ ಫೋನಿನಲ್ಲಿ ಅದ್ದಿದ ಮುಖಗಳನ್ನು ಹೊರ ತೆರೆಯಲು ಪ್ರಯತ್ನಿಸುತ್ತಿದ್ದಳು. ಕಡೆಗೊಮ್ಮೆ ಬಸ್ಸು ನಿಧಾನಿಸಿ ನಿಂತಾಗ, ಎಲ್ಲರನ್ನು ಕೆಳಗಿಳಿಸಿ, ಪಕ್ಕದ ಕಟ್ಟೆಯ ಮೇಲೆ ನಿಂತು, ಕೆಳಗೆ ಹರಿಯುತ್ತಿದ್ದ ತಮೆಗಾ ನದಿಯ ಪರಿಚಯವನ್ನೂ, ಗೋನ್ಸಾಲರ ಇಗರ್ಜಿಯನ್ನೂ ತೋರಿಸಿ, ಮುಕ್ಕಾಲು ಘಂಟೆಯೊಳಗೆ ಎಲ್ಲ ಸುತ್ತಿ, ಫೋಟೋದಲ್ಲಿ ಕಟ್ಟುವಷ್ಟು ಕಟ್ಟಿ, ಮತ್ತೆ ಬಸ್ಸಿನಲ್ಲಿರಬೇಕೆಂದು ಅಪ್ಪಣಿಸಿದಳು. ಅಷ್ಟಕ್ಕೇ ನಿಲ್ಲಿಸದೆ, ತನ್ನ ಮೊಬೈಲಿನಲ್ಲಿದ್ದ ಫೋಟೋವೊಂದನ್ನು ಗುಂಪಿನ ಎಲ್ಲ ಅಡಲ್ಟಿಗರಿಗೆ ತೋರಿಸುತ್ತ, ಅವರ ನಾಚಿಕೆಯ, ಆಶರ್ಯದ ನಗುವಿಗೆ ತಾನು ನಗುತ್ತ, ಅದೊಂದು ಜೋಕು ಎಂದಳು. ಅವಳು ತೋರಿಸಿದ ಆ ಫೋಟೋದ ಮರ್ಮ ಮತ್ತು ಅದರ ಹಿಂದಿನ ಜೋಕು ಆಗ ಅರ್ಥವಾಗಿರಲಿಲ್ಲ. ಸುಮ್ಮನೆ ನಕ್ಕೆವು.
ಅನಬೆಲ್ಲ ಹೇಳಿದಂತೆ, ಆ ಹಳೆಯ ಬ್ರಿಡ್ಜಿನತ್ತ ನಡೆದು, ಅದರ ಮೇಲೆ ನಿಂತು ಆಚೆ ಈಚೆಯ ಕಟ್ಟಡಗಳನ್ನು, ಕೆಳಗೆ ಹರಿಯುತ್ತಿರುವ ನದಿಯ ಹರಿವನ್ನೂ ನೋಡುತ್ತಾ, ಗೊನ್ಸಾಲರು ತಮ್ಮ ಪವಾಡದಲ್ಲಿ ಮೊದಲು ಕಟ್ಟಿದ, ಆನಂತರ ೧೭-೧೮ ಶತಮಾನದಲ್ಲಿ ಮತ್ತೆ ಹೊಸದಾಗಿ ಕಟ್ಟಿದ, ನೆಪೋಲಿಯನ್ನಿನ ಕಾಲದಲ್ಲಿ ನಡೆದ ಹೋರಾಟದಲ್ಲಿ ಸಿಡಿದ ಗುಂಡುಗಳ ಕಲೆಯನ್ನ ಇನ್ನೂ ಸಾಕಿರುವ ಆ ಬ್ರಿಡ್ಜನ್ನು ದಾಟಿ, ಅಮರಾಂತೆಯ ಸಂತರ ಇಗರ್ಜಿಯತ್ತ ನಡೆದ ನಮಗೆ, ಮೊದಲು ಕರೆದದ್ದು ಅಲ್ಲಿನ ಕಾರ್ ಪಾರ್ಕಿನ ಪಕ್ಕದ ಸಣ್ಣ ತೋಟದಲ್ಲಿ ದೊಡ್ಡದಾಗಿ ಇಂಗ್ಲಿಷ್ ಅಕ್ಷರಗಳಲ್ಲಿ ನಿಲ್ಲಿಸಿಟ್ಟ AMARANTE. ಬಣ್ಣ ಬಣ್ಣದ ಆ ದೊಡ್ಡ ಅಕ್ಷರಗಳ ಮುಂದೆ ನಿಂತು ಫೋಟೋದಲ್ಲಿ ನಮ್ಮ ಜೊತೆ ಅದನ್ನು ಸೇರಿಸಿ ಹೊರನಡೆಯುವಾಗ, ಪಕ್ಕದಲ್ಲೇ ಚಪ್ಪರವೊಂದರ ಕೆಳಗೆ ಒಂದಿಷ್ಟು ಸಾಮಾನುಗಳನ್ನು ಮಾರುತ್ತಿದ್ದ, ಆ ಕಾರ್ ಪಾರ್ಕಿನ ಒಂದೇ ಅಂಗಡಿಯತ್ತ, ಅಲ್ಲಿನ 'ವಿಶಿಷ್ಣ' ಆಕಾರದ, ಪ್ಲಾಸ್ಟಿಕಿನಲ್ಲಿ ಸುತ್ತಿಟ್ಟ ವಸ್ತುಗಳನ್ನ ಏನೆಂಬ ಕುತೂಹಲದಲ್ಲಿ ನೋಡಲು ಹತ್ತಿರ ಹೋದೆವು. ಅಲ್ಲಿದ್ದದ್ದು, ಅನಬೆಲ್ಲ ಫೋನಿನಲ್ಲಿ ಜೋಕೆಂದು ತೋರಿಸಿದ ಆಕಾರದ ಸಣ್ಣ, ದೊಡ್ಡ, ಗಟ್ಟಿ, ಮತ್ತು ಮೆತ್ತನೆಯ ವೆರೈಟಿಯ ಕೇಕುಗಳು.
ಆ ಕೇಕುಗಳ ದರ್ಶನದಿಂದ ಮನಸ್ಸಿನಲ್ಲಿ ಕುಣಿಯುತ್ತ ಮುಖದಲ್ಲಿ ಹೊರಬರಲು ಯತ್ನಿಸುತ್ತಿದ್ದ ಚೇಷ್ಟೆಯ ಹುಡುಗುತನವನ್ನ ಸ್ವಲ್ಪ ಬದಿಗಿಟ್ಟು, ಆ ಅಂಗಡಿಯ ಒಡತಿಗೆ, ಆ ಕೇಕುಗಳ ಆಕಾರದ ಹಿಂದಿನ ಕಥೆ ಏನೆಂದು ಕೇಳಿದೆವು. ನಮ್ಮ ಇಂಗ್ಲೀಷು ಆಕೆಯ ಪೋರ್ಚುಗೀಸು ನಡುವೆ ಯಾವುದೇ ಸೇತುವೆ ಇಲ್ಲದ ಕಾರಣ, ಕೈ ಸನ್ನೆಯಲ್ಲಿ ಒಂದು ಕೇಕಿನ ದುಡ್ಡು ಕೇಳಿ, ಕೊಂಡು, ಸಕ್ಕರೆಯ ಐಸಿಂಗಿನ ಆ ಕೇಕಿನ ಪ್ಲಾಸ್ಟಿಕಿನ ಬಂಧನದಿಂದ ಹೊರ ತಂದು, ತರತರದಲ್ಲಿ ಕೈಯಲ್ಲಿ ಹಿಡಿದು, ಫೋಟೋ ಮತ್ತು ವಿಡಿಯೋಗಳಲ್ಲಿ ಅದನ್ನು ವರ್ಣಿಸಿ, ಆಪ್ತ ಗೆಳೆಯರ ವಾಟ್ಸಪ್ಪ್ ಗುಂಪಿಗೆ ಆ ಕೇಕನ್ನು ವಿಡಿಯೋದ ಮೂಲಕ ಅರ್ಪಿಸಿ, ಮುನ್ನಡೆದೆವು. ಆಗ ಮಾತೆಲ್ಲ ಆ ಕೇಕು ಹುಟ್ಟಿದ, ಮತ್ತೆ ಹೀಗೆ ದಿನ ದಿನ ಅಮರಾಂತೆಯ ಹಲವು ಓವನ್ನು ಗಳಲ್ಲಿ ಬೇಯುತ್ತಿರುವ ಅದರ ಅವತಾರಗಳ ಹಿಂದಿನ ಕಾರಣಕ್ಕೆ ನಮ್ಮ ಊಹೆಯ ಪಟ್ಟಿ.
ಹಾಗೆ ಪಕ್ಕದ ಇಗರ್ಜಿಯ ಮುಂದಿಷ್ಟು ಭಂಗಿಗಳಲ್ಲಿ ನಮ್ಮನ್ನು ಫ್ರೇಮಿಸಿಕೊಂಡು, ಬ್ರಿಡ್ಜಿನ ಮೊದಲ ಬದಿಗೆ ಮರಳಿ, ಪಕ್ಕದ ಬೀದಿಯಲ್ಲಿ ಕಾಪಿಯ ಬಾಯಾರಿಕೆಗೆ ಹೊರಟ ನಮಗೆ ಮತ್ತೆ ಅಲ್ಲಿನ ಟೂರಿಸ್ಟ್ ಅಂಗಡಿಗಳ ಮ್ಯಾಗ್ನೆಟ್ಟುಗಳಲ್ಲಿ, ಹಾಗೆಯೇ ಆ ಬೀದಿಯ ಕೆಲವು ಬೇಕರಿಗಳಲ್ಲಿ ಮತ್ತದೇ ಕೇಕಿನ ದರ್ಶನ. ಬೇಕರಿಯ ಕೇಕುಗಳಿಗೆ ಸಕ್ಕರೆಯ ಕವಚವಿದ್ದರೆ, ಮ್ಯಾಗ್ನೆಟಿನ ಚಿತ್ರಗಳ ಕೇಕಿನ ಮೇಲೆ ಒಂದು ಹಲ್ಲಿ. ಆ ಮ್ಯಾಗ್ನೆಟ್ಟನ್ನು ಕೊಂಡುಕೊಳ್ಳುವಷ್ಟು ಧೈರ್ಯ ಬರಲಿಲ್ಲ. ಯಾವತ್ತಿನಂತೆ ಮೊಬೈಲಿನ ಕ್ಯಾಮರಾಕ್ಕೆ ಸೇರಿಸಿಕೊಂಡೆವಷ್ಟೇ. ಅಷ್ಟರಲ್ಲಿ ಸಮಯದ ಮುಳ್ಳು ಅನಬೆಲ್ಲ ಹಾಕಿದ ಗೆರೆ ಮುಟ್ತುತ್ತಿದ್ದರಿಂದ, ಅವಸರದಲ್ಲಿ ಕಾಪಿ ಕಪ್ಪು ಹಿಡಿದು ಬಸ್ಸಿನತ್ತ ಓಡಿದಂತೆ ನಡೆದೆವು.
ಬಸ್ಸಿನ ಬಾಗಿಲಿನ ಪಕ್ಕ ನಿಂತಿದ್ದ ಅನಬೆಲ್ಲಳ ಹತ್ತಿರ ಅಮರಾಂತೆಯ ಕೇಕಿನ ಕಥೆ ಮತ್ತೆ ಕೇಳಲು, ಅವಳು ಅದರ ಹೆಸರು ಸಂತ ಗೊನ್ಸಾಲಿನ್ಹೋ ಎಂದೂ, ಹಾಗೆಂದರೆ 'ದಿ ಲಿಟಲ್ ಗೋನ್ಸಾಲ್' ಎಂದರ್ಥವೆಂದೂ, ಮತ್ತೆ ಒಂದು ಕಾಲದಲ್ಲಿ ಅತಿ ಪ್ರಬಲವಾಗಿದ್ದ ಚರ್ಚಿನ ಹಿಡಿತದ ವಿರುದ್ಧ ಯಾವಾಗಲೋ ಸಿಡಿದೆದ್ದ ರೆಬೆಲಿಗರು, ಅವರ ಕೋಪ ಮತ್ತೆ ವ್ಯಂಗ್ಯವನ್ನು ವ್ಯಕ್ತಪಡಿಸಲು ಮೊದಮೊದಲು ಈ ಕೇಕನ್ನು ಬೇಯಿಸಿದರೆಂದೂ, ಹಾಗೆ ಬರುಬರುತ್ತ ಅದು ಅಮರಾಂತೆಯ ಜೋಕಿನ ಕೇಕಾಗಿ ಬಿಟ್ಟಿದೆ ಎಂದೆಲ್ಲ ವಿವರಿಸಿದಳು. ಅಷ್ಟಕ್ಕೇ ನಿಲ್ಲದೆ, ಆ ಕೇಕನ್ನು ತಿಂದವರಿಗೆ ಅವರಿಷ್ಟದ 'ಲವ್' ಸಿಗುತ್ತದೆ ಎಂದು ಜೋರಾದ ನಗುವಿನಲ್ಲಿ ಹೇಳುತ್ತಾ ಬಸ್ಸು ಹೊರಡಿಸಿದಳು.
ಅವಳ ವಿವರಣೆ, ಸಮಾಜದ ಪ್ರಬುದ್ಧತೆಗೆ ಅನುಗುಣವಾಗಿ ಹೋರಾಟದ ಮಜಲುಗಳು ವ್ಯಕ್ತವಾಗುವ ರೀತಿ, ಅವುಗಳ ಹಿಂದಿನ ಪ್ರೇರಣೆ ಮತ್ತು ಧೈರ್ಯವನ್ನು ಮೆಚ್ಚುತ್ತ, ವಿಮರ್ಶಿಸುತ್ತಾ, ನೆನಪಿನ ಕೊಟ್ಟೆಯಲ್ಲಿ ಬೇರೆ ಬೇರೆ ರೀತಿಯಲ್ಲಿ ಅಮರಾಂತೆಯನ್ನ ಮಡಿಚಿಡುತ್ತಿದ್ದವು. ಅಮರಾಂತೆಯನ್ನು ದಾಟಿದ ಮೇಲೂ ತಣಿಯದ ಕುತೂಹಲದಲ್ಲಿ ಹುಡುಕಿದ ವಿಕಿಪಿಡಿಯಾದಲ್ಲೂ ಅನಬೆಲ್ಲ ಕಥೆಯಷ್ಟು ವಿವರಗಳಿರಲಿಲ್ಲ. ಆದರೆ, 'ಸಂತ ಗೊನ್ಸಾಲಿನ್ಹೋ' ಚಿತ್ರವಿದೆ ಅಲ್ಲಿ, ಬೇಕಾದರೆ, ಸಣ್ಣ ಮಕ್ಕಳು ಪಕ್ಕ ಇಲ್ಲದಿದ್ದಾಗ ಸೈಲೆಂಟಾಗಿ ನೋಡಿ ನಮಸ್ಕರಿಸಿಬಿಡಿ.
ಅನಿವಾಸಿಗಳಾದ ನಮಗೆ ನಮ್ಮ ಜನ್ಮಭೂಮಿ ಭೇಟಿ ಮಾಡುವ ಅವಕಾಶ ಒದಗಿ, ಒಂದಷ್ಟು ದಿನ ತಾಯಿನೆಲದ ಗಾಳಿ ಬೆಳಕಿನಲ್ಲಿ ನಾವು ತೋಯ್ದು ಬರುವ ಗಳಿಗೆಗಳು ಒದಗಿ ಬಂದಾಗ ವ್ಯಕ್ತಪಡಿಸಲಾಗದ ಒಂದು ಖುಷಿ ಮನಸ್ಸನ್ನು ಆವರಿಸಿಕೊಳ್ಳುತ್ತದೆ. ಅದಕ್ಕೆ ನಾನು ಕೂಡ ಹೊರತಲ್ಲ. ನಾನು ಈ ಬಾರಿ ಭಾರತಕ್ಕೆ ಭೇಟಿ ಕೊಟ್ಟಿದ್ದು ನಾಲ್ಕು ವರ್ಷ ಒಂಬತ್ತು ತಿಂಗಳುಗಳ ಧೀರ್ಘ ಅಂತರದ ನಂತರ. ಯುಕೆ ಗೆ ಬಂದ ನಂತರ ನಾನು ಭಾರತಕ್ಕೆ ಹೋಗಿದ್ದು ಮೂರೇ ಬಾರಿ ಹೋದಾಗಲೆಲ್ಲ ಕೆಲವು ಜವಾಬ್ದಾರಿಗಳನ್ನು ಹೊತ್ತುಕೊಂಡೇ ಹೋಗಿದ್ದೆ, ತಂಗಿ ಮದುವೆ, ಮಗನ ಉಪನಯನ, ಪುಟ್ಟ ಮಗಳನ್ನು ಎತ್ತಿಕೊಂಡು ಹೀಗೆ ಏನಾದರೊಂದು ಕಾರಣಗಳಿಂದ ನನಗೆ ಬೇಕಾದೆಡೆ ಬೇಕಾದಂತೆ ನನ್ನ ರಜಾ ಕಾಲವನ್ನು ಕಳೆಯುವುದು ಸಾಧ್ಯವಾಗಿರಲಿಲ್ಲ. ಜೊತೆಗೆ ಅದು ಅಗತ್ಯ ಅಂತ ಕೂಡ ಅನಿಸಿರಲಿಲ್ಲ. ಹೋದಾಗಲೆಲ್ಲ ಅಮ್ಮನ ಕಯ್ಯಡಿಗೆ ತಿಂದು. ಅತ್ತೆಮನೆಗೆ ಹೋದಾಗ ಏಕಮೇವ ಸೊಸೆಯಾದ ಕಾರಣ ಅವರ ಇಚ್ಛೆ, ಬಯಕೆಗಳಂತೆ ಸುತ್ತಮುತ್ತಲಿನ ದೇವಸ್ಥಾನ ಸುತ್ತಿ ,ಸಂಬಂಧಿಕರ ಮನೆಗೆ ಹೋಗಿ ಅವಕಾಶ ಆದರೆ ಯಾವುದೋ ಒಂದೆರಡು ಪೂಜೆಯಲ್ಲಿ ಆರತಿ ಹಾಡು ಹೇಳಿದರೆ ನನ್ನ ಭಾರತ ಪ್ರಯಾಣ ಮುಗಿದಿರುತ್ತಿತ್ತು. ಇದಕ್ಕಿಂತ ಭಿನ್ನವಾಗಿ ನಾನು ಕೂಡ ಎಂದೂ ಯೋಚಿಸಿಯೂ ಇರಲಿಲ್ಲ.
ಆದರೆ ಈ ಬಾರಿ ಭಾರತ ಭೇಟಿ ನನ್ನ ಪಾಲಿಗೆ ಅತೀ ವಿಶೇಷ, ಕೋವಿಡ್,lockdown ಅಂತೆಲ್ಲ ಎರಡುಬಾರಿ ನನ್ನ ವಿಮಾನ ರದ್ದಾಗಿತ್ತು,ಮಕ್ಕಳ ಶಾಲೆ ,ಪತಿಯ ಉದ್ಯೋಗ ,ಇದೆಲ್ಲ ನನ್ನ ಮನಸಿಗೆ ಬಂದಾಗ ಟ್ರಿಪ್ ಪ್ಲಾನ್ ಮಾಡಲು ಸಹಕಾರಿಯಾಗಿರಲಿಲ್ಲ. ಹೀಗಾಗಿ ನಾಲ್ಕು ವರ್ಷ ಒಂಬತ್ತು ತಿಂಗಳ ನಂತರ ನಾನು ತಾಯ್ನೆಲವನ್ನು ನೋಡಲಿದ್ದೆ , ತನ್ನ ಪರಿವಾರ ಕುಟುಂಬವನ್ನು ಭೇಟಿಯಾಗಲಿದ್ದೆ. ಗೋವಿನ ಹಾಡು ಪೂರ್ಣ ಪಾಠವನ್ನ ರೆಕಾರ್ಡ್ ಮಾಡಬೇಕೆನ್ನುವ ಪೂರ್ವ ನಿಯೋಜನೆ ಬಿಟ್ಟರೆ ನಾನು ಬೇರೆ ಯಾವುದೇ ಪ್ಲಾನ್ಗಳನ್ನು ಮಾಡದೆ ಸುಮ್ಮನೆ ಹೋಗಿದ್ದೆ. ಸಮಷ್ಟಿ ತನ್ನಷ್ಟಕ್ಕೆ ತಾನೇ ನನ್ನ ೫೦ ದಿನಗಳನ್ನು ಅತ್ಯಂತ ಸುಂದರವಾಗಿ ಯೋಜಿಸಿ ಕೊಟ್ಟಿತ್ತು . ನಾನು ಖುಷಿಯನ್ನ ಆಸ್ವಾಧಿಸಲೋ ಸಮಷ್ಟಿಗೆ ಧನ್ಯವಾದ ಹೇಳಲೋ ತಿಳಿಯದಾಗಿತ್ತು . ಸಿಕ್ಕ ಗಳಿಗೆಗಳನ್ನು ನನ್ನ ಪುಟ್ಟ ಕ್ಯಾಮರಾದಲ್ಲಿ ಫ್ರೀಜ್ ಮಾಡಿ ಇಡುವುದೊಂದೇ ನನಗಿದ್ದ ಆಯ್ಕೆ ಎಷ್ಟೋ ಬಾರಿ ಅದು ಕೂಡ ಆಗಲಿಲ್ಲ. ಅನಿವಾಸಿ ಗುಂಪು ನನ್ನ ಮಟ್ಟಿಗೆ ನನ್ನ ಯುಕೆಯ ತವರುಮನಿ ಇದ್ದಂತೆ, ನನ್ನ ಪುಟ್ಟ ಪುಟ್ಟ ಪ್ರಯತ್ನಗಳನ್ನು ಶ್ಲಾಘಿಸಿ ಮತ್ತಷ್ಟು ಸಾಧನೆಗೆ, ಓದಿಗೆ ಹಚ್ಚುವ ನನ್ನ ಅತ್ಯಾಪ್ತ ಬಳಗ, ನಿಮ್ಮೆಲ್ಲರೊಂದಿಗೆ ನನ್ನ ಭಾರತ ಭೇಟಿಯ ಅತ್ಯಂತ ಖುಷಿಯ ಕೆಲ ತಾಸುಗಳ ಅನುಭವ ಹಂಚಿಕೊಳ್ಳುವ ಇಚ್ಛೆ ನನ್ನದು.
ಊರಿಗೆ ಹೋದರೆ ಧಾರವಾಡಕ್ಕೆ ಹೋಗದಿದ್ದರೆ ನನ್ನ ಪ್ರವಾಸವೇ ಅಪೂರ್ಣ,ನನ್ನ ಊರಿಂದ ಧಾರವಾಡ ೭೦ಕಿಲೋಮೀಟರ ದೂರ, ಹೀಗೆ ಮನಸು ಬಂದಾಗಲೆಲ್ಲ ಹೋಗಿ ಬರಬಹುದು.ಮತ್ತು ಧಾರವಾಡ್ ಹೋಗಲು ಯಾವುದೇ ಕಾರಣ ನೆವಗಳು,ಬೇಡ ಇದೊಂದು ರೀತಿ ಮನಸು ಬಂದಾಗ ಗುಡಿಗೆ ಹೋಗುತ್ತೀವಲ್ಲ ಹಾಗೆ. ಆದರೆ ಈ ಸಲದ ಮೊದಲ ಧಾರವಾಡದ ಭೇಟಿ ಸಾಧ್ಯ ಆಗಿದ್ದು ಪ್ರಜಾವಾಣಿಯ ೭೫ನೇ ವರ್ಷದ ಸಂಭ್ರಮಾಚರಣೆಯ ನಿಮಿತ್ತ ಏರ್ಪಡಿಸಿದ್ದ ಒಂದು ಚಂದದ ಕವಿಗೋಷ್ಠಿ, ಮತ್ತು ಸಂಗೀತ ವಿದ್ಯಾಲಯದ ಮಕ್ಕಳಿಂದ ವಿಶೇಷ ಗಾಯನ ಕಾರ್ಯಕ್ರಮ ಜೊತೆಗೆ ನನ್ನ ಗಾಯನ ಕಾರ್ಯಕ್ರಮವನ್ನೂ ಆಯೋಜಿಸಿದ್ದರಿಂದ.
ಆನಂದಕಂದರು ಬರೆದ 'ನಲ್ವಾಡಗಳು' ಕವನ ಸಂಕಲನವನ್ನು ಕೆಲವರ್ಷಗಳಿಂದ ಹುಡುಕುತ್ತಿದ್ದೆ, ಎಲ್ಲಿ ಪ್ರಯತ್ನಿಸಿದರೂ ಸಿಗಲಿಲ್ಲ. ಫೇಸಬುಕ್ ನಿಂದ ಪರಿಚಿತರಾದ ರಾಜ್ ಕುಮಾರ್ ಮಡಿವಾಳರ್ ಅವರಿಗೆ ಬೆಲ್ಫಾಸ್ಟ್ ನಲ್ಲಿ ಇರುವಾಗಲೇ ಒಂದು ಮೆಸೇಜ್ ಮಾಡಿ ಕೇಳಿದ್ದೆ ನಿಮ್ಮಲ್ಲಿ ಅಪ್ಪಿತಪ್ಪಿ ನಲ್ವಾಡುಗಳು ಸಂಕಲನ ಇದ್ದರೇ ಅದರದೊಂದು copy ಸಿಗಬಹುದೇ ? ಎಂದು. ಬಂದಾಗ ಬರ್ರಿ ಐತಿ ಕೊಡ್ತೀನಿ ಅಂದ್ರು.
ಸಪ್ತಾಪುರದಲ್ಲಿ ಇರುವ ಅವರ ಅಂಗಡಿಗೆ ಹೋಗಿ ಪುಸ್ತಕ collect ಮಾಡಲು ಹೋದವಳು ಅವರು ಹೇಳುವ ಸಾಹಿತ್ಯ ಲೋಕದ ಚಂದದ ಕಥೆಗಳನ್ನ ಕೇಳುತ್ತ,ಹಾಡುಗಳ ಬಗ್ಗೆ ಮಾತಾಡುತ್ತ ಸಮಯ ಹೋದದ್ದೇ ಗೊತ್ತಾಗಲಿಲ್ಲ. ಅವರಿಗೆ ಎಂದು ತಂದುಕೊಂಡಿದ್ದ ಬುತ್ತಿಯಲ್ಲಿ ನನಗೊಂದು ಪಾಲು ಕೊಟ್ಟು ಅವರ ಶ್ರೀಮತಿ ಸುಮಾ ಮತ್ತು ರಾಜ್ಕುಮಾರ್ ಅವರು ನನ್ನ ಜೀವ ಬಂಧುಗಳೇ ಆಗಿದ್ದರು.
ಇನ್ನೇನು ಹೊರಡಬೇಕು ಅನ್ನುವಾಗ 'ಇಲ್ಲೇ ಹಳ್ಳಿಯೊಳಗ ಒಂದು ಕನ್ನಡ ಸಾಲಿ ಐತ್ರಿ ನಿಮಗ ಆಗತದ ಅಂದ್ರ ಒಂದೈದು ನಿಮಿಷ ಹೋಗಿ ಬರೋಣ,?' ಅಂದ್ರು ನನಗೆ ಇಲ್ಲ ಅನ್ನುವ ಮನಸು ಇಚ್ಛೆ ಎರಡು ಇರಲಿಲ್ಲ. ಅವರ ಕಾಕಾನ ಕಾರಿನಲ್ಲಿ ನಾನು ಹೊರಟಿದ್ದು ಧಾರವಾಡ ಹತ್ತಿರದ ಹಳ್ಳಿ ಮುಗಧ ಕ್ಕೆ. ಹೆಸರಿನಷ್ಟೇ ಚಂದ ಊರು ಅದು. 'ಬೇಂದ್ರೆಯವರು ಮೇಘದೂತ ಬರೆಯಲು ಶುರು ಮಾಡಿದ್ದು ಇದೆ ಊರಿನ ದೇವಿ ಗುಡಿಯ ಕಟ್ಟಿ ಮ್ಯಾಲೆ' ಅನ್ನುವ ಮಾತು ಕೇಳುತ್ತಲೇ ನನಗೆ ಮಾತೆ ಹೊರಡಲಿಲ್ಲ .ಒಂದುರೀತಿಯ ಖುಷಿಯ ಗುಂಗು.
ಮುಗದದ ಶಾಲೆಯ ಅತೀ ಉತ್ಸಾಹಿ ,ಸಾಹಿತ್ಯಪ್ರೇಮಿ ಶಿಕ್ಷಕರು ನನ್ನನು ೧೦ ನೇ ತರಗತಿಯ ಮಕ್ಕಳೊಂದಿಗೆ ಮಾತಾಡಲು ತರಗತಿಗೆ ಕರೆದುಕೊಂಡು ಹೋದರು, ಮಕ್ಕಳು ಬೇಂದ್ರೆಯವರ ಎರಡು ಗೀತೆಗಳನ್ನು ಚಂದದ ರಾಗದಲ್ಲಿ ಹಾಡಿದರು. ಹಕ್ಕ್ಕಿಹಾರುತಿದೆ ನೋಡಿದಿರಾ? ಎಂಬ ಗೀತೆ ಕೇಳಿದ್ದ ನನಗೆ, ಮಕ್ಕಳು ಆ ಗೀತೆಯ ಹಿಂದೆಯೇ ಬೆಕ್ಕು ಹಾರುತಿದೆ ನೋಡಿದಿರಾ ಅಂತೇ ಅದೇ ರಾಗದಲ್ಲಿ ಹಾಡಿದಾಗ ಮತ್ತು ಈ ಗೀತೆಯು ಬೇಂದ್ರೆಯವರೇ ಬರೆದದ್ದು ಎಂದು ತಿಳಿದಾಗ ಅತೀವ ಆಶ್ಚರ್ಯವಾಯಿತು. ಮಕ್ಕಳಿಗೆ ನಾನೂ ಒಂದೆರಡು ಹಾಡು ಹೇಳಿಕೊಟ್ಟೆ. ಮಕ್ಕಳ ಮುಗ್ಧ ಪ್ರಶ್ನೆಗಳಿಗೆ ಉತ್ತರಿಸುವಾಗ , ಕೆಲವೇ ವರ್ಷಗಳ ಹಿಂದೆ ನಾನುಕೂಡ ಈ ಮಕ್ಕಳಂತೆ ಇಂಥದೇ ಶಾಲೆಯಲ್ಲಿ ಹೀಗೆ ಖುಷಿ ಖುಷಿಯಾಗಿ ಹಾಡು ಹೇಳುತ್ತಾ ಕುಳಿತಿದ್ದಿದು ನೆನಪಾಯಿತು. ಆ ಶಾಲೆಯಿಂದ ವಾಪಸ್ ಧಾರವಾದ ತಲುಪುವ ಹೊತ್ತಿಗೆ ಮನಸೆಲ್ಲ ಬೇಂದ್ರೆ , ಮೇಘದೂತ , ರಾಜಕುಮಾರ್ ಅಣ್ಣ ಹೇಳಿದ ಬೇಂದ್ರೆ ಅಜ್ಜನ ಕಥೆಗಳು. ಇಷ್ಟು ಹತ್ತಿರ ಬಂದು ಬೇಂದ್ರೆಅಜ್ಜನ ಮನೆಯ ಆವರಣಕ್ಕೆ ಒಮ್ಮೆ ಹೋಗಿ ಬರದಿದ್ದರೆ ಅಂತ ಅನ್ನಿಸಿದ್ದರೂ ಆದಿನ ಸಮಯ ಮೀರಿ ಹೋಗಿತ್ತಾದ್ದರಿಂದ ಸುಮ್ಮನೆ ಮನೆಗೆ ಮರಳಿದೆ.
ಇನ್ನೇನು ಸೂಟಿ ಮುಗೀತು ಮತ್ತ ಗಂಟುಮೂಟಿ ಕಟಗೊಂಡು ವಾಪಸ್ ಕರ್ಮಭೂಮಿಗೆ ಹೊರಡ್ಲಿಕ್ಕೆ ಬರೀ ಐದ ದಿನ ಉಳದಾವು ಅನ್ನೋ ಹೊತ್ತಿನಲ್ಲಿ ಮತ್ತೊಮ್ಮೆ ಧಾರವಾಡ ಹೋಗುವ ಗಳಿಗೆ ಕೂಡಿ ಬಂತು., ದೂರದಿಂದ ಬಂದ ಸ್ನೇಹಿತರೊಬ್ಬರಿಗೆ ಬೇಂದ್ರೆಯವರ ಮನೆ ನೋಡಬೇಕಿತ್ತು, ಬೇಂದ್ರೆ ಭವನದಲ್ಲಿ ಇದ್ದ ಸಿಬ್ಬಂದಿಯನ್ನು ಮನೆಯ ಗೇಟಿನೊಳಕ್ಕೆ ಹೋಗಲು ಅನುಮತಿ ಕೇಳಿದೆವು, ಆರಂ ಆಗಿ ಹೋಗಿ ಬರ್ರಿ , ನೀವು ಒಳಗೂ ಹೋಗಬಹುದು. ಅಲ್ಲೇ ಬೇಂದ್ರೆಯವರು ಬಳಸಿದ ವಸ್ತುಗಳು ಅದಾವು ಅದನ್ನೂ ನೋಡಿ ಬರ್ರಿ, ಆಮೇಲೆ ಅವರ ಭಾವಚಿತ್ರಗಳ ಸಂಗ್ರಹ ನೋಡ್ಲಿಕ್ಕೆ ಇಲ್ಲಿ ಬರ್ರಿ ಎಂದರು.
ನಾವು ಗೇಟಿನೊಳಗೆ ಕಾಲು ಇಟ್ಟಾಗ ಚಂದದ ಬೆಳಗು ಹಳದಿ ಗೋಡೆಯ ಮನೆಯನ್ನು ಇನ್ನೂ ಚಂದ ಮಾಡಿತ್ತು, ಅವರ ಮೊಮ್ಮೊಗಳು ಮತ್ತವರ ಪತಿ ತುಂಬಾ ಆತ್ಮೀಯವಾಗಿ ಮಾತನಾಡಿದರು, ನಾನು ಮೆತ್ತಗೆ 'ನಾನು ಹುಟ್ಟಿದ್ದು ಬೇಂದ್ರೆಯವರ ಜನ್ಮದಿನದಂದು' ಅಂದೆ. ಹಂಗಾದ್ರ ನೀವೂ ಬರೀತೀರಿ? ಅಂದ್ರು, ನಾನು `ಇಲ್ಲ ರೀ ಹಾಡ್ತೀನಿ` ಅಂದೇ, ಅದು ಹೆಂಗ ಸಾಧ್ಯ ? ಅವರ ಹುಟ್ಟಿದ ದಿನ ಹುಟ್ಟಿ ಬರೆಯಲ್ಲ ಅಂದ್ರ ? ಅಂದು ನಕ್ಕರು. ಫೋಟೋ ವಿಡಿಯೋಗ್ರಫಿ ಹುಚ್ಚು ಇರುವ, ಅದಕ್ಕಿಂತ ಹೆಚ್ಚು ಬೇಂದ್ರೆ ಅವರನ್ನು ಪ್ರೀತಿಸುವ ನನ್ನ ಸ್ನೇಹಿತರು `ನಾವು ಕೆಲ ಹಾಡುಗಳನ್ನ ರೆಕಾರ್ಡ್ ಮಾಡ್ಕೊಬಹುದಾ? ಎಂದು ಕೇಳಿದಾಗ ಬೇಂದ್ರೆ ಅಜ್ಜನ ಮೊಮ್ಮಗಳು ಅರ್ರೆ ,ಅದ್ಯಾಕ್ ಕೇಳ್ತೀರಿ ಮಾಡ್ಕೋರಿ ಅಂತ ಖುಷಿಯಿಂದ ಒಪ್ಪಿಕೊಂಡರು.
ಹಾಡುವ ಯಾವುದೇ ತಯಾರಿ ಮಾಡಿಕೊಳ್ಳದ ನಾನು ಅವರು ಹಾಡು ಅಂದ ತಕ್ಷಣ ನೆನಪಿಗೆ ಬಂದಿದ್ದು - ಇನ್ನು ಯಾಕ ಬರಲಿಲ್ಲವ್ವ ... ಕವಿತೆಯ ಸಾಲುಗಳು.
ವಾಹನಗಳ ಸದ್ದಿನ ನಡುವೆ ನಾನು ಹಾಡಿದ್ದು ಅದೆಷ್ಟು ಸರಿಯಾಗಿದೆಯೋ ಗೊತ್ತಿಲ್ಲ ,ಆದರೆ ಕನ್ನಡದ ಇಬ್ಬರು ಮೇರು ಕವಿಗಳು ವಾಸಿಸಿದ, ಓಡಾಡಿದ ಸ್ಥಳದಲ್ಲಿ ನನಗೆ ಅವರ ಹಾಡುಗಳನ್ನು ಹಾಡುವ ಅವಕಾಶ, ಅದೃಷ್ಟ ಭಗವಂತ ಒದಗಿಸಿಕೊಟ್ಟಿದ್ದಕ್ಕೆ ನಾ ಅವನಿಗೆ ಋಣಿ. (ಇಲ್ಲಿಗೆ ಬರುವ ಮೊದಲು ಮೈಸೂರಲ್ಲಿ ಕುವೆಂಪು ಅವರ ಮನೆಯ ಆವರಣದಲ್ಲಿ ಕೂತು ಸಹ ಅವರ ಒಂದು ಕವನವನ್ನು ಹಾಡಿದ್ದೆ.)