ಚಿತ್ರ ಬರೆಸಿದ ಕವಿತೆ

 ಓದುಗರಿಗೆಲ್ಲ ಆತ್ಮೀಯ ನಮಸ್ಕಾರ,
ಸಾಮಾಜಿಕ ಜಾಲತಾಣಗಳು ಮನುಷ್ಯನ ಭಾವಾಭಿವ್ಯಕ್ತಿಗೆ ಸಶಕ್ತ ಮಾಧ್ಯಮಗಾಳಾಗಿವೆ. ಬರವಣಿಗೆ, ಹಾಡು, ಅನಿಸಿಕೆ ಅಭಿಪ್ರಾಯಗಾಲ ಜೊತೆಗೇ ಸೋಶಿಯಲ್ ಮೀಡಿಯಾಗಳಲ್ಲಿ ಫೋಟೋ ಹಾಕುವುದು, ಬಹಳಷ್ಟು ಜನರ ಪ್ರಮುಖವಾದ ಹವ್ಯಾಸವಾಗಿ ಬದಲಾಗಿದೆ. ಫೋಟೋ ವಿಡಿಯೋ ಹಾಕುವ ಕಾಯಕವೇ ಹಣಗಳಿಸುವ ಉತ್ತಮ ವೇದಿಕೆಯಾಗಿಯೂ ಮಾರ್ಪಟ್ಟಿದೆ. ಒಂದಿಷ್ಟು ಜನ ತಮ್ಮ ವೈಯಕ್ತಿಕ ಜೀವನವನ್ನು ಚಿತ್ರಗಳ ಮೂಲಕ ಜಗತ್ತಿನ ಮುಂದೆ ಅನಾವರಣ ಗೊಳಿಸಿದರೆ, ಮತ್ತೊಂದಷ್ಟು ಜನ ಹೂವು, ಹಣ್ಣು, ನೀರು, ಆಕಾಶ, ಕೀಟ, ಹಕ್ಕಿ ಅಂತೆಲ್ಲ ನಮ್ಮ ಸುತ್ತಲಿನ ಸುಂದರ ಜಗತ್ತನ್ನು ಇನ್ನೂ ಸುಂದರವಾಗಿ ತಮ್ಮ ಚಿತ್ರಗಳ ಮೂಲಕ ಚಿತ್ರಿಸಿ ನಮ್ಮ ಮುಂದಿಟ್ಟು ರಂಜಿಸುತ್ತಾರೆ. ಈ ಚಿತ್ರಗಳು ಪರಿಚಯವೇ ಇಲ್ಲದ ಜಗತ್ತಿನ ಅದ್ಯಾವುದೋ ಮೂಲೆಯಲ್ಲಿದ್ದುಕೊಂಡು ಮತ್ತೊಬ್ಬ ಸಮಾನಸಕ್ತನ ಭಾವಕೋಶದ ಪದರನ್ನು ಮೆತ್ತಗೆ ತಟ್ಟಿ, ಸ್ಫೂರ್ತಿ ಕೊಡುತ್ತವೆ. ಕವಿಮನಸನ್ನು ಆವರಿಸಲು ಯಶಸ್ವಿಯಾದ ಒಂದೇ ಒಂದು ಭಾವಚಿತ್ರ ಸಾವಿರ ಭಾವಗಳನ್ನು ಪದಗಳಲ್ಲಿ ಹೊಮ್ಮಿಸಲೂಬಹುದು.

ನಾನು ಆಗಾಗ್ಯೆ, ನನ್ನ ಕ್ಯಾಮೆರಾ ಮತ್ತು ಫೋನಿನಲ್ಲಿ ತೆಗೆದ ಚಿತ್ರಗಳನ್ನ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ಎಂಬ ಸಾಮಾಜಿಕ ಜಾಲತಾಣಗಲ್ಲಿ ಹಂಚಿಕೊಳ್ಳುತ್ತಾ ಇರುತ್ತೇನೆ. ಅಲ್ಲಿರುವ ಕೆಲ ಕವಿ ಹೃದಯಗಳಿಗೆ ನಾನು ಹಂಚಿಕೊಂಡ ಚಿತ್ರಗಳು ಇಷ್ಟವಾಗಿ ಅವರ ಮನ ಸೃಜಿಸಿದ ಭಾವವನ್ನು ಅಕ್ಷರರೂಪಕ್ಕಿಳಿಸಿ ನನ್ನೊಂದಿಗೆ ಹಂಚಿಕೊಳ್ಳುತ್ತಾರೆ.
ಇತ್ತೀಚಿಗೆ ಲ್ಯಾಂಡ್ ಸ್ಕೇಪ್, ಹೂ, ನದಿ, ಚಿಕ್ಕ ಚಂದ್ರರ ಫೋಟೋ ಕ್ಲಿಕ್ ಮಾಡುವಾಗಲೆಲ್ಲ, ಈ ಸ್ನೇಹಿತರು ನೆನಪಾಗಿ ಬಿಡುತ್ತಾರೆ. ಈ ಚಿತ್ರ ಇವರಿಗೆ ಇಷ್ಟ ಆಗಬಹುದು/ಆಗುತ್ತದೆ ಎಂದು ಮನಸ್ಸು ಹೇಳುತ್ತದೆ.

ನಾನು ಕ್ಲಿಕ್ಕಿಸಿದ ಭಾವಚಿತ್ರವನ್ನು ಸ್ಫೂರ್ತಿಯಾಗಿ ಕವಿತೆಯನ್ನು
ಬರೆದು ಕಳಿಸುವ ನನ್ನ ಮೆಚ್ಚಿನ ಮೇದಿನಿ, ಈಶ್ವರ ಭಟ್ ಕೆ, ಮತ್ತು ಗುರುರಾಜ ಹೇರ್ಳೆ ಅವರನ್ನು ಅನಿವಾಸಿ ಬಳಗಕ್ಕೆ ಪರಿಚಯಿಸಿ,
ಚಿತ್ರಗಳೊಂದಿಗೆ, ಅವರ ಕವಿತೆ ಹಂಚಿಕೊಳ್ಳುತ್ತಿರುವೆ .
—ಅಮಿತಾ ರವಿಕಿರಣ್ ( ವಾರದ ಸಂಪಾದಕಿ)
ಈ ನೀಲಿಯಾಚೆಗೆ....

ಈ ನೀಲಿಯಾಚೆಗೆ ಆ ಮೋಡದೀಚಿಗೆ
ನಗುತಿರುವ ಸಗ್ಗವೊಂದಿದೆ ಅಲ್ಲಿ ಬಾ
ನೀಲಿಯೊಳು ಮೈಮರೆತು ಮೋಡದೊಳು
ಮರೆಯಾಗಿ ಜಗವನ್ನೆ ಹೊರನೂಕಿ ಮೆರೆಯೋಣ ಬಾ

ಬಾನು ಭುವಿ ಮೈಮರೆತು ಮಾತನಾಡುವುದಲ್ಲಿ
ಮರದ ಮಾತೆಲ್ಲವೂ ಮೋಡದೊಡನೆ ಧುಮ್ಮಿಕ್ಕಿ
ಹಾಲ್ನೊರೆಯ ತೇಲಿಸುವ ನದಿಯೊಂದು
ಸಂಭಾಷಿಸಿಹುದು ತೀರದೊಡನೆ

ಮಾತು ಮರೆತಿಹ ಮನಸು
ನೋಟ ಮರೆತಿಹ ಅಕ್ಷಿ
ಕಾಲ ಪ್ರವಾಹದಲಿ ಕಳೆಯೋಣ ಬಾ
ಮೌನದಾಚೆಯ ಮಾತು ಕಣ್ಣಿನಾಚೆಯ ನೋಟ
ಹೇಳುತಿದೆ ಏನನ್ನೊ ಕೇಳೋಣ ಬಾ

ಕುಂತಲ್ಲಿ ಏನಿಹುದು, ನಿಂತಲ್ಲಿ ಸೊಗಸೇನು
ಸಾಗಿ ಹೋಗೋಣ ಆ ತೀರದೆಡೆಗೆ
ನೀಲಿಯಾಚೆಯ ನಾಡು ಮೋಡದೀಚೆಯ
ಜಾಗ ಸೃಷ್ಟಿಯಾಗಿಹ ನೀಲ ಸ್ವರ್ಗದೆಡೆಗೆ

ತಬ್ಬುವುದೆಂದರೇನು ಸಖೀ?!

ತಬ್ಬುವುದೆಂದರೇನು ಸಖೀ?!
ತೋಳುಗಳ ಬಂಧನವೇ?
ಹೃದಯದ ಬೆಸುಗೆಯೇ
ಅಗಲಿರಲಾರೆನೆಂದು ಕೈ ಮೇಲೆ ಕೈಯಿಟ್ಟ ಪ್ರಮಾಣವೇ?

ತಬ್ಬುವುದೆಂದರೇನು ಸಖೀ?
ದಿನದ ಅಷ್ಟೂ ಘಳಿಗೆಯಲ್ಲೂ
ಜೊತೆಗಿದ್ದು
ಅಂಟಿಯೂ ಅಂಟದಂತೆ
ನವಿರಾಗಿ ತಾಗುತ್ತಾ
ಕಣ್ಣಲ್ಲೇ ಹೊರಡಿಸುವ ಪ್ರೇಮದ ನೋಟವೇ?

ತಬ್ಬುವುದೆಂದರೇನು ಸಖೀ?
ನೀಲಾಕಾಶವು
ನೀಲಸಮುದ್ರವ ಕರೆಯುತ್ತಾ
ನಾ ಕೆಳಗಿಳಿದೆ, ನೀ ಮೇಲೆ ಬಾ ಎನ್ನುವ
ಸಂಭ್ರಮದಿ
ತಾಗಿಯೂ, ತಾಗದಿರುವುದೇ
ತಬ್ಬುವುದೆಂದರೇನು ಸಖೀ?!

ಈಶ್ವರ ಭಟ್ ಕೆ (ಕಿರಣ),

ಮೂಲತಃ ಕಾಸರಗೋಡು ಕೇರಳದವರು. ಈಗ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿ. ಹವ್ಯಾಸ ಬರಹ, ತಿರುಗಾಟ.
ಗಡಿನಾಡಿನ ಸೀಮೆಯವರು ಆಗಿದ್ದಕ್ಕೂ ಏನೋ, ಕಿರಣರಿಗೆ ದಕ್ಷಿಣ ಭಾರತದ ಎಲ್ಲ ಭಾಷೆಗಳೂ ಮಾತಾಡಲು ಮತ್ತು ಓದಲು ಬರೆಯಲು ಬರುತ್ತದೆ ಅದೇ ಕಾರಣದಿಂದ ಆ ಭಾಷೆಯ ಕಥೆ, ಕವನ, ಭಜನೆಗಳನ್ನು ತುಂಬಾ ಸುಂದರವಾಗಿ ಕನ್ನಡಕ್ಕೆ ಅನುವಾದಿಸುತ್ತಾರೆ.
ಇವರ ಕವಿತೆಗಳು ಸರಳವಾಗಿ ಹಾಡಿಸಿಕೊಂಡು ಹೋಗುತ್ತವೆ. ರಾಗಕ್ಕೆ, ತಾಳಕ್ಕೆ ಹೊಂದುವ ಸಾಹಿತ್ಯ ಬರೆಯುವ ಇವರು, ಹಾಸ್ಯಬರಹ, ಮತ್ತೆ ಅಷ್ಟೇ ಗಂಭೀರ ವಿಷಯಗಳನ್ನೂ ಬರೆಯಬಲ್ಲರು.

ಮಲ್ಲಿಗೆಯವಳು.

ಹೂವಬುಟ್ಟಿಯ ಹೊತ್ತು ಮಲ್ಲಿಗೇ ಮಲ್ಲಿಗೇ
ಎಂದೆನುತ ಬಂದಳೋ ಬಿಂಕದವಳು
ಮೊಳಕೆ ಎಷ್ಟೆಂದರೆ ಕಣ್ಣಲ್ಲೆ ಗದರಿಸುತ
ಹಣದ ಲೆಕ್ಕಾಚಾರ ಯಾಕೆಂಬಳು!

ಮೊಳಕೆ ಮೂವತ್ತಾಯ್ತೆ? ಮೊನ್ನೆ ಇಷ್ಟಿರಲಿಲ್ಲ
ಪಿಸುಮಾತಿಗಳಿಗಿಷ್ಟು ಕೋಪಗೊಂಡು;
ಮಲ್ಲಿಗೆಯ ಗಿಡಕೆಲ್ಲ ರೋಗ ಬಂದಿದೆ ಒಡೆಯ
ಮೊನ್ನೆಯಷ್ಟಿಲ್ಲ ಹೂ ಎಂದೆಂಬಳು.

ಒಂದು ಮೊಳ ಸಾಕೆನಗೆ, ತೆಗೆದುಕೋ ನಲುವತ್ತು
ಎಂದಾಡಿದರೆ ಮತ್ತೆ ಜನ್ಮ ಹೊರಗೆ;
ಮಾಲೆ ಕಟ್ಟುವ ಸಮಯ ಪರಿಮಳವ ಕುಡಿದೆಹೆನು
ನಾ ಹೇಳುವಷ್ಟನೇ ಕೊಡು ಎಂದಳು.

ಮೊಳ ಕತ್ತರಿಸುವಾಗ ಒಂದಿಷ್ಟು ಹೆಚ್ಚಿಸುತ
ಜೊತೆಗಷ್ಟು ಗುಲಾಬಿ ತೆಗೆದಿಡುತಲಿ;
ಹೂವನ್ನು ಹೆಚ್ಚಿಸುವ ಖುಷಿ ತುಂಬುಮೊಗದಲ್ಲಿ
ನಾಳಿನಾ ಭರವಸೆಯ ನಗು ನಕ್ಕಳು.
ಸೂರ್ಯಾಸ್ತ!

ಅಲ್ಲಿ ಕೆರೆಯಂಚಿನಲಿ, ಮುಳುಗುತಿಹ ನೇಸರಗೆ
ಮರದ ಹಸಿರನು ಕಪ್ಪು ಮಾಡುವಾಸೆ
ಇಲ್ಲಿಯೋ ತಂಗಾಳಿ ಬಿಸಿಯೇರೆ ಹಣಕಿಸುತ
ಹತ್ತಿರಕೆ ಕಳಿಸುವುದು, ಒಲವಿನಾಸೆ!

ಎಷ್ಟು ಮಾತುಗಳಾಡಿ, ಜಗಳದಲಿ ಒಂದಾಗಿ
ಮತ್ತೆ ಮಾತಿನ ದೋಣಿ ತೇಲಿಹೋಗಿ
ಸುತ್ತ ಕತ್ತಲೆ ಹಬ್ಬಿ ಮಾತು ಮೌನಕೆ ದಣಿದು
ಅವಳ ಸಾಮೀಪ್ಯವನೆ ಅಲೆವ ರೋಗಿ

ಹಾರುವುದು ಎದೆಗನಸು ನೂರು ಮೈಲಿಗಳಾಚೆ
ಅಲ್ಲಿಯೂ ನೇಸರನು ಮುಳುಗುತಿಹನು
ಅವಳಿಗೂ ಇದೆ ನೆಪವು, ಇಂತಹದೆ ಬೇಸರವು
ಏನನೋ ಕಾಯುವುದು, ಹೆಳವ ನಾನು.

ಒಂದು ದಿನವಾದರೂ ಸಂಜೆಯಾಗದೆ ಇರಲಿ
ದೂರವಿಹ ವಿರಹಿಗಳ ಎದೆಯ ಸುಡದೆ ಮಂದಮಾರುತ ಹೋಗಿ ಸುಖಿಪವರ ಜೊತೆಗಿರಲಿ
ನನ್ನ ಕಾಡಲುಬೇಡ, ಅವಳು ಸಿಗದೆ




ಗುರುರಾಜ ಹೇರ್ಳೆ

 ಮೂಲತಃ ಉಡುಪಿ ಜಿಲ್ಲೆಯ ಸಾಲಿಗ್ರಾಮ ಎಂಬ ಊರಿನವರು. ಪ್ರಸ್ತುತ  ಬಹರೈನ್ ಎಂಬ ಪುಟ್ಟ ದ್ವೀಪ ರಾಷ್ಟ್ರದಲ್ಲಿ ಉದ್ಯೋಗಿ  ವಾಸ. ಪ್ರಾರಂಭಿಕ ಓದು, ಬೆಳವಣಿಗೆ ಎಲ್ಲ ಉಡುಪಿಯಲ್ಲೇ ಆದರೂ, ಉನ್ನತ ವ್ಯಾಸಂಗ ಮತ್ತು ಉದ್ಯೋಗಕ್ಕಾಗಿ ಬೆಂಗಳೂರಿನಲ್ಲಿಯೂ ಒಂದಷ್ಟು ಕಾಲ ವಾಸಮಾಡಿದ್ದಾರೆ. 
ಇವರು ಒಳ್ಳೆಯ ಹಾಡುಗಾರರು. ಭಾವಗೀತೆಗಳ ಮೇಲೆ ಒಲವು ಜಾಸ್ತಿ. ಮಕ್ಕಳ ಹಾಡುಗಳು, ಪ್ರೇಮಗೀತೆಗಳನ್ನು ಬರೆಯುತ್ತಾರೆ. ಬರೆದ ಪದ್ಯಕ್ಕೆ ರಾಗ ಹಾಕಿ ಹಾಡುತ್ತಾರೆ ಕೂಡ

ಸಾಗರ ಸನ್ನಿಧಿ

ನೀಲ ಸಾಗರವನ್ನು ನೆಚ್ಚಿ ದೋಣಿಯೊಂದು ಸಾಗಿದೆ,
ಹಾಯಿ ಬಿಚ್ಚಿ ಗಾಳಿ ಬೀಸೋ ದಿಕ್ಕಿನತ್ತೇ ನಡೆದಿದೆ

ನಾಂತದಲ್ಲಿ ಬಾನು ಬುವಿಯು ಸೇರಿದಂತೆ ಭಾಸವು
ತೀರ ಸಿಗದ ದಾರಿಯಲ್ಲಿ ಮುಗಿಯದಿರುವ ಯಾನವು

ಒಮ್ಮೆ ಇಳಿತ ಒಮ್ಮೆ ಭರತ, ಏಳು ಬೀಳಿನಲೆಗಳು
ಒಮ್ಮೆ ನೋವು ಒಮ್ಮೆ ನಲಿವು, ಇದುವೇ ಜೀವನ ರೀತಿಯು

ಕಣ್ಣು ಹಾಯಿಸಿದಷ್ಟು ನೀರು ಕುಡಿಯಲಿನಿತು ಸಾಧ್ಯವೇ ?
ಬಾಳಿನಲ್ಲೂ ನೂರು ಜನರು, ಎಲ್ಲ ಜೊತೆಗೆ ಬರುವರೇ ?

ಅಲ್ಲಿ ಇಲ್ಲಿ ಸಿಗಲು ಬಂಡೆ ದಣಿವನಾರಿಸಬೇಕಿದೆ,
ಹಳೆಯ ತಪ್ಪನೆಲ್ಲ ಮರೆಯದೆ ದಾರಿ ಸಾಗಬೇಕಿದೆ
ಗಮ್ಯ ತಲುಪಬೇಕಿದೆ.
ಬಂದೇ ಬರುತಾವ ಕಾಲ.

ಈ ಸಮಯವೂ ಸರಿದು ಹೋಗಲೇಬೇಕು
ನಮಗೆಂದೇ ಒಂದು ಕಾಲ ಬರಲೇಬೇಕು

ಕರೆದ ಹಾಲದು ಕೆನೆಯ ಕಟ್ಟಲುಬೇಕು
ಹೆಪ್ಪುತಾಗೆ ಗಟ್ಟಿಮೊಸರು ಆಗಲೇಬೇಕು,
ಕಡೆಯಲದನು ಬೆಣ್ಣೆ ಮೇಲೆ ತೇಲಲೇಬೇಕು
ಬಿಸಿತಾಕಲು ಕರಗಿ ತುಪ್ಪವಾಗಲೇಬೇಕು

ಹರುಷ ಹೊನಲಿನ ನದಿಯು ಉಕ್ಕಲೇಬೇಕು
ಮುನಿದ ದೈವವು ಮುಗುಳು ನಗಲುಬೇಕು
ಬಾಡಿದಂತ ಲತೆಯು ಮತ್ತೆ ಚಿಗುರಲುಬೇಕು
ಮುದುಡಿದ ತಾವರೆ ಅರಳುತ ನಲಿಯಲೇಬೇಕು

ಇರುಳಲಿ ಕರಗಿದ ತಿಂಗಳು ಮೂಡಲೇಬೇಕು
ಮುಳುಗಿದ ರವಿ ಮೂಡಣದಿ ಹುಟ್ಟಲೇಬೇಕು
ಧಗೆಯೇರಲು ಮೇಘ ಕರಗಿ ಸುರಿಯಲೇಬೇಕು,
ಸುಖ ಶಾಂತಿ ನೆಮ್ಮದಿಯ ತರಲೇಬೇಕು


ಕನ್ನಡ ನಾಡು, ಭಾಷೆ, ಉತ್ಸವ, ಮತ್ತು ಹೊಸವರ್ಷ …..

ಅನಿವಾಸಿಯ ಬಳಗಕ್ಕೆ ನಮಸ್ಕಾರ. 2025ರ ಹೊಸವರ್ಷದಲ್ಲಿಯ ನನ್ನ ಮೊದಲ ಸಂಚಿಕೆಗೆ ನಿಮ್ಮೆಲ್ಲರ ಸ್ವಾಗತ.  ಅನಿವಾಸಿ ಬಳಗದ ಉತ್ಸಾಹ ಹೆಚ್ಚುತ್ತಿರುವುದಕ್ಕೆ ಇತ್ತೀಚೆಗೆ ನಡೆದ ದಶಮಾನೋತ್ಸವ, ಹೊಸ ಸದಸ್ಯರುಗಳ ಆಗಮನ, ಬರವಣಿಗೆ ಇತ್ತ್ಯಾದಿಗಳೇ ಸಾಕ್ಷಿ.  ಇದರ ಜೊತೆಯಲ್ಲೇ, ಕೆಲವೇ ವಾರಗಳ ಹಿಂದೆ (ಕಳೆದ ವರ್ಷ ಅನ್ನಬಹುದಿತ್ತೇನೋ, ಆದರೆ ಎಷ್ಟೋ ದಿನ ಆದಂತೆ ಅನ್ನಿಸುವುದರಿಂದ ಬೇಡ ಅಂದುಕೊಂಡೆ) ಸಕ್ಕರೆಯ ನಾಡು, ಮಂಡ್ಯದಲ್ಲಿ ಹಿರಿಯ ಸಾಹಿತಿ ಶ್ರೀ ಗೋ ರು ಚನ್ನಬಸಪ್ಪನವರ ಅಧ್ಯಕ್ಷತೆಯಲ್ಲಿ ನಡೆದ 87ನೆಯ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲೆಂದೇ ನಮ್ಮ ಅನಿವಾಸಿ ಬಳಗದ ಪ್ರತಿನಿಧಿಯಾಗಿ ತೆರಳಿದ್ದರು ನಮ್ಮ ನವೀನ್.  ಅವರು ಬರೆದ ವರದಿ ಇಲ್ಲಿ ಕೆಳಗಿದೆ.  ಅವರೇ ತೆಗೆದ ಹಲವು ಚಿತ್ರಗಳೂ ಜೊತೆಯಲ್ಲಿವೆ - ಅದರಲ್ಲಿ ಪರಿಚಿತ ಮುಖಗಳಿವೆ, ನೋಡಿ.

ಜೊತೆಯಲ್ಲಿ ನಮ್ಮ ಗೋಪಾಲಕೃಷ್ಣ ಹೆಗಡೆಯವರ ಒಂದು ಕವನವಿದೆ, ಹೊಸವರ್ಷದ ಆಶಯಗಳೊಂದಿಗೆ. ಅವರದ್ದೇ ಮಾತಿನಲ್ಲಿ ಕವನದ ಹುಟ್ಟಿನ ಪರಿಚಯವೂ ಇದೆ.

ಕೊನೆಯ ಕೊಸರಿನಂತೆ, ಹೆಗ್ಡೆಯವರದೊಂದು ಚಿತ್ರಕ್ಕೆ ನನ್ನದೊಂದು ಕಿರು ಕವನವನ್ನೂ ಹಾಕಿಬಿಟ್ಟಿದ್ದೇನೆ, ತಡೆಯಲಾರದೆ. ಕ್ಷಮೆಯಿರಲಿ.

ಎಂದಿನಂತೆ ಓದಿ, ತಮ್ಮೆಲ್ಲರ ಮನೋಭಿಪ್ರಾಯವನ್ನು ತಿಳಿಸುವುದನ್ನು ಮುಂದುವರೆಸಿ. ಹೊಸವರ್ಷದ ಶುಭಾಶಯಗಳು.
- ಲಕ್ಷ್ಮೀನಾರಾಯಣ ಗುಡೂರ
*******************************************
೮೭ ನೇ ಕನ್ನಡ ಸಾಹಿತ್ಯ ಸಮ್ಮೇಳನ ೨೦೨೪, ಮಂಡ್ಯ

ಇತ್ತೀಚಿಗಷ್ಟೆ ೮೭ನೆ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಿತು. ಅದಕ್ಕಂತಲೇ ನಾನು ಭಾರತಕ್ಕೆ ಹೋಗಿದ್ದೆ. ಬಹಳ ವರ್ಷಗಳಿಂದಲೂ ಸಮ್ಮೇಳನದಲ್ಲಿ ಭಾಗಿಯಾಗುವ ತವಕವಿತ್ತು. ಆದರೆ ಆ ಸುಸಂದರ್ಭ ಈಗ ದೊರಕಿತು. ಬಹಳ ನಿರೀಕ್ಷಣೆಯಿಂದ ಸಿದ್ಧತೆ ಮಾಡಿಕೊಂಡಿದ್ದೆ. ಸಾಹಿತ್ಯ ಸಮಾರೋಪದಲ್ಲಿ ಸಾಕಷ್ಟು ಸಾಹಿತ್ಯದಬಗ್ಗೆ, ಕನ್ನಡ ಭಾಷೆ ಬಗ್ಗೆ ಕೇಳಿಬರುತ್ತದೆ, ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿರುವಸಾಹಿತಿ, ಕವಿ, ಬರಹಗಾರರ ನಡುವೆ ನಡೆದಾಡಿ, ಅವರನ್ನು ಆಲಿಸಿ ಅವರಿಂದ ಪ್ರೇರಣೆ ಪಡೆಯುವುದಲ್ಲದೆ, ಕನ್ನಡ ಭಾಷಾಕ್ಷೇತ್ರದಲ್ಲಿ ಎಂಥಹ ಬೆಳವಣಿಗೆ ರೂಪಗೊಂಡಿದೆ ಎಂದು ಕಾಣುವ ಹಂಬಲ ಬೆಳಸಿಕೊಂಡಿದ್ದೆ. ಇದಕ್ಕನುಗುಣವಾಗಿ ಲೀಡ್ಸ್ನಲ್ಲಿ ಮಾಡುತಿದ್ದ ಕೆಲಸವನ್ನು ಮೊಟಕುಗೊಳಿಸಿ ಹತ್ತಿದೆ, ಯುನೈಟೆಡ್ ಕಿಂಗ್ಡಮ್ನ ರಾಯಭಾರಿಯಂತೆ ಭಾವಿಸಿ. ಯಾಕಂದರೆ ನನಗೆ ತಿಳಿದಿರಲಿಲ್ಲ ಬೆರ್ಯಾರಾದರು ಇಲ್ಲಿಂದ ಹೋಗುವರೇನೋ ಅಂತ. ಆದರೆ ಅಲ್ಲಿಗೆ ಹೋದಮೇಲೆ ಲಂಡನಿನಿಂದ ಬಂದಿದ್ದ ಇನ್ನಿಬ್ಬರನ್ನು ಭೇಟಿಮಾಡಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಮಹೇಶ್ ಜೋಶಿಯವರು ಕೆಲವೇ ದಿನಗಳ ಹಿಂದೆ ಬಂದು ನಮ್ಮೆಲ್ಲರಿಗೂ ಆಮಂತ್ರಣ ಕೊಟ್ಟಿದ್ದರು. ನಮ್ಮ ದೇಶವಲ್ಲದೆ ಕನ್ನಡಿಗರಿರುವ ಹತ್ತಾರು ರಾಷ್ಟ್ರಗಳಿಗೂ ಹೋಗಿ ವೈಯಕ್ತಿಕವಾಗಿ ಅಭಿಮಾನಿಗಳು ಭಾಗವಹಿಸಬೇಕೆಂದು ವಿನಂತಿಸಿಕೊಂಡಿದ್ದರು. ಕನ್ನಡ ಸಾಹಿತ್ಯ ಪರಿಷತ್ತು ಹಾಗು ಸಾಹಿತ್ಯ ಸಮ್ಮೇಳನ ಬರೇ ಕರ್ನಾಟಕದ ಕನ್ನಡ ಜನರ ತಾಣವಲ್ಲ, ಅವು ಪ್ರಪಂಚದ ಎಲ್ಲೆಡೆ ನೆಲಸಿ ತಮ್ಮ ತಾಯ್ನಾಡನ್ನ ಮರೆಯದ ಜನಸಮುದಾಯದ ಸಂಸ್ಥೆಗಳು ಎಂದು ಸಾರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ನಾನು ಗುರುವಾರ ೧೯ನೆ ತಾರೀಖಿನಂದೇ ಮಂಡ್ಯಕ್ಕೆ ಹೊರಟೆ. ವಿದೇಶದಿಂದ ಬರುವ ಎಲ್ಲ ಪ್ರತಿನಿಧಿಗಳಿಗೆಂದೇ ವಿಶೇಷ ವ್ಯವಸ್ಥೆ ಬಹಳ ದಿನಗಳಿಂದಲೇ ರೂಪಗೊಂಡಿತ್ತು. ಮೈಸೂರಿನ ಸಂದೇಶ್ ಪ್ರಿನ್ಸ್ನಲ್ಲಿ ನಮಗೆ ಉಳಿದುಕೊಳ್ಳುವ, ಅಲ್ಲಿಂದ ಪ್ರತಿದಿನ ಸಮ್ಮೇಳನ ನಡೆಯುವ ಮಂಡ್ಯಕ್ಕೆ ಹೋಗಿಬರುವ ಸಾರಿಗೆ ಏರ್ಪಾಟು ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ನಿವೇದಿತಾ ಹೊನ್ನತ್ತಿಯವರ ನೇತೃತ್ವದಲ್ಲಿ ಬಹಳ ಅಚ್ಚುಕಟ್ಟಾಗಿ ಯೋಜಿಸಿ ಕಾರ್ಯಗತ ಮಾಡಲಾಗಿತ್ತು. ನನ್ನ ಭಾಷೆಯ ಸಮ್ಮೇಳನಕ್ಕೆ ನಾನೇ ಎಲ್ಲ ಖರ್ಚುಗಳನ್ನ ವಹಿಸಿಕೊಂಡು ಸರ್ಕಾರಕ್ಕಾಗಲಿ ಪರಿಷತ್ತಿಗಾಗಲಿ, ಸಮ್ಮೇಳನ ಸಂಚಾಲಕ ಇಲಾಖೆಗಾಗಲಿ ಋಣಿಯಾಗಬಾರದೆಂದಿದ್ದೆ. ಆದರೆ ನಮಗ್ಯಾವ ಕುಂದುಕೊರತೆಯಾಗದೆ, ಶುಲ್ಕವೂಯಿಲ್ಲದೆ ವಸತಿ, ಊಟ, ಜೊತೆಗೆ ಮನರಂಜನೆ, ಸಾಹಿತ್ಯ ರಸದೌತಣ ಉಣಿಸಿದ ಎಲ್ಲರಿಗೂ ನಾವು ಚಿರಋಣಿಯಾಗಿರಬೇಕು.

ಮಂಡ್ಯದಲ್ಲಿ ಅದೊಂದು ದೊಡ್ಡ ‘ಕುಂಭಮೇಳ’ ಅನ್ನಬೇಕು. ವಿಶಾಲ ಜಾಗ, ಲಕ್ಷಾಂತರ ಜನರು ಕೂರುವಂಥ ಸಭಾಂಗಣ, ಅದಕ್ಕೆ ತಕ್ಕಂಥ ಅದ್ದೂರಿ ಪ್ರವೇಶದ್ವಾರ, ದೃಷ್ಟಿಯಗಲಕ್ಕೂ ಮೀರಿದ ವೇದಿಕೆ, ಮಹಾಮಂಟಪ, ಅಲ್ಲಲ್ಲೇ ನೋಡಲನುಕೂಲವಾಗುವಂಥ ಕ್ಲೋಸ್ಡ್-ಸರ್ಕ್ಯೂಟ್ ಟಿವಿ, ಹೊರಗಿದ್ದರೂ ಕೇಳಿಸಿಕೊಳ್ಳುವಂಥ ಧ್ವನಿ ವ್ಯವಸ್ಥೆ, ಇವೆಲ್ಲ ದೊಡ್ಡ ಪ್ರಮಾಣದ ವಿನ್ಯಾಸವೆಂತಲೇ ಭಾವಿಸಬೇಕು.

ಸಮ್ಮೇಳನದ ವಿಶೇಷತೆ ಅದರ ಸಭಾಧ್ಯಕ್ಷರಾದ ನಾಡೋಜ ಗೊ ರು ಚನ್ನಬಸಪ್ಪನವರು. ೯೪ ವರ್ಷಗಳಾಗಿದ್ದರೂ ಅವರ ಮಾತಿನಲ್ಲಿದ್ದ ಸ್ಪಷ್ಟತೆ, ಶಬ್ದಭಂಡಾರ, ನಿರರ್ಗಳತೆ ಎಂತಹವರನ್ನೂ ಮೋಡಿ ಮಾಡುವಂಥದು. ನೇರವಾಗಿ ಸರ್ಕಾರಕ್ಕೆ ಮತ್ತು ವಾಣಿಜ್ಯ ಉದ್ಯಮಿಗಳಿಗೆ ಕರೆ ಕೊಟ್ಟರು. ಕನ್ನಡ ಭಾಷೆ ಉಳಿಯಲು ಬೆಳೆಸಲು ಅವರಿಂದ ಯಾವ ತರಹದ ಉತ್ತೇಜನ ದೊರಕಬೇಕು, ಅದರಲ್ಲೂ ಆರ್ಥಿಕ ಹೊಣೆ ವಹಿಸಿಕೊಳ್ಳಬೇಕೆಂದು. ಕನ್ನಡ ವಿಶ್ವವಿದ್ಯಾನಿಲಯ, ಕನ್ನಡ ಶಾಲೆಗಳು ಮುಚ್ಚುವಂಥ ಸ್ಥಿತಿಯನ್ನು ತಡೆಗಟ್ಟಲು ಸರ್ಕಾರ ಯಾವ ಕ್ರಮ ಕೈಗೊಳ್ಳಬೇಕು ಎಂದು ವೇದಿಕೆ ಮೇಲಿದ್ದ ರಾಜಕೀಯ ಮುಖಂಡರಿಗೆ ಮನದಟ್ಟು ಮಾಡಿದರು. ಕನ್ನಡ ಪ್ರಾಚೀನ ಭಾಷೆಯಾಗಿದ್ದರೂ ಇಂದಿನ ತಂತ್ರಜ್ಞಾನ ಅಳವಡಿಸಿಕೊಂಡು, ಎಲ್ಲರಿಗೂ, ಅದರಲ್ಲೂ ಪ್ರಚಲಿತ ಯುವಪೀಳಿಗೆಗೆ ತಟ್ಟುವಂಥ ಮಾರ್ಪಾಟು ಮಾಡಿಕೊಳ್ಳಬೇಕು ಎಂದು ಕರೆಯಿತ್ತರು. ಇದರ ಜೊತೆಗೆ ಅವರು ಮತ್ತಿತರ ಮಹತ್ತರ ವಿಷಯಗಳನ್ನೂ ಚರ್ಚಿಸಿದರು. ಶಿಕ್ಷಣ ಮಾಧ್ಯಮ, ಅಂತರ-ರಾಜ್ಯ ಭಾಷಾವಿನಿಮಯ, ಕನ್ನಡ ಕಲಿಕಾ ಕೇಂದ್ರಗಳು, ಪರಿಸರ ಸಂರಕ್ಷಣೆ, ಧರ್ಮದ ದುರುಪಯೋಗ, ಮಹಿಳಾ ಸಮಾನತೆ ಹಾಗು ಸ್ವಾಯತ್ತತೆ, ಕನ್ನಡಿಗರ ಉದ್ಯೋಗ ಬದುಕು, ಪ್ರವಾಸೋದ್ಯಮ, ಮುಂತಾದ ವಿಚಾರಗಳನ್ನು ಎತ್ತಿ ತೋರಿಸಿ ಆ ದಿಕ್ಕಿನಲ್ಲಿ ಏನೆಲ್ಲಾ ಕೆಲಸಕಾರ್ಯಗಳು ನಡೆಯಬೇಕಾಗಿದೆ ಎಂದು ವಿವರಿಸಿದರು.

ಕೆಲವರ ಭಾಷಣಗಳು ತೀರ್ವವಾಗಿದ್ದವು. ಮುಖ್ಯಮಂತ್ರಿ ಚಂದ್ರುರವರು ಸಭಾಧ್ಯಕ್ಷರು ಉಲ್ಲೇಖಿಸಿದ ವಿಷಯಗಳಲ್ಲಿ ಸರ್ಕಾರ ವರ್ಷದಿಂದ ವರ್ಷಕ್ಕೆ ಅನುಸರಿಸುತ್ತಿರುವ ನಿರ್ಲಕ್ಷರೀತ್ಯಕ್ರಮವನ್ನು ಕಟುವಾಗಿ ರಾಜಕೀಯ ಮುಖಂಡರ ಮುಂದೆಯೇ ಟೀಕಿಸಿದರು. ಪ್ರತಿ ಸಮ್ಮೇಳನದಲ್ಲೂ ದೊಡ್ಡ ದೊಡ್ಡ ಭಾಷಣಗಳು ಆಗುತ್ತವೆ, ಮುಂದೆ ಮಾಡಬೇಕಾದ ಅಭಿವೃದ್ಧಿ ಕೆಲಸಗಳ ನಿರ್ಣಯವೂ ಆಗುತ್ತೆ, ಆದರೆ ಸಮ್ಮೇಳನ ತದನಂತರ ಅವೆಲ್ಲ ಒಣಆಶ್ವಾಸನೆಗಳಾಗೆ ಉಳಿಯುತ್ತವೆ ಎಂದು ಆಕ್ಷೇಪಿಸಿದರು.

ಅನೇಕ ಕವಿಗೋಷ್ಠಿಗಳು, ಉಪನ್ಯಾಸಗಳು, ಸಮಾಲೋಚನೆಗಳು ಮೂರು ದಿನಗಳಲ್ಲೂ ಹಬ್ಬಿಕೊಂಡು ಕಿಕ್ಕಿರಿದು ತುಂಬಿದ ಮಂಡ್ಯ ಜನಸಮೂಹಕ್ಕೆ ಒಂದು ರೀತಿಯ ಜ್ಞಾನೋದಯ ಉಂಟುಮಾಡಿತು. ಬೆಳಿಗ್ಗೆಯಿಂದ ಸಂಜೆವರೆಗೂ ಈ ಕಾರ್ಯಕ್ರಮಗಳಾದ ಮೇಲೆ ಮನರಂಜನೆ ಸಾಗುತಿತ್ತು. ಒಂದು ದಿನ ಸಾಧು ಕೋಕಿಲ, ಮತ್ತೊಂದು ಸಂಜೆ ಅರ್ಜುನ ಜನ್ಯ ನೆರೆದಿದ್ದ ಯುವಕ ಯುವತಿಯರನ್ನು ಕುರ್ಚಿ ಮೇಲೆಯೇ ನಿಂತು ಕುಣಿದಾಡುವಂತೆ ಮಾಡಿದರು.

ಪುಸ್ತಕ ಮಳಿಗೆಗಳು ಮತ್ತೊಂದು ವೈಶಿಷ್ಟತೆ. ಕೊಂಡುಕೊಳ್ಳುವರಿಗಂತೂ ಅದೊಂದುಹಬ್ಬವೇ. ಬಹುಷಃ ಇಲ್ಲಿವರೆಗೆ ಪ್ರಕಟವಾಗಿರುವ ಎಲ್ಲ ಕಾದಂಬರಿಗಳು ನಾಟಕಗಳುಕಾವ್ಯಗಳು, ಇತರೆ ಅನೇಕ ಬರವಣಿಗಗಳು ಮಳಿಗೆಗಳಲ್ಲಿ ರಾರಾಜಿಸುತ್ತಿದ್ದವು. ಪ್ರಕಾಶಕರುಅಲ್ಲಿ ತಮ್ಮ ತಮ್ಮ ಪ್ರಕಟಣೆಗಳನ್ನು ಸಾಲು ಸಾಲು ಅಂಗಡಿಗಳಲ್ಲಿ ಬಿತ್ತರಿಸಿ ೫೦%ಗೂ ಮಿಗಿಲಾಗಿ ರಿಯಾಯಿತಿ ಕೊಟ್ಟು ಓದುಗರನ್ನು ಪ್ರೇರೇಪಿಸುತ್ತಿದ್ದರು. ಅಷ್ಟೊಂದು ಪುಸ್ತಕಗಳು ಒಂದೇ ಜಾಗದಲ್ಲಿ ಪ್ರದರ್ಶನವಾದದನ್ನು ಬಹುಷಃ ನಾನು ನೋಡಿರಲಿಲ್ಲ.

ವಿದೇಶಿ ಕನ್ನಡಿಗರ ಸಂಘಟನೆ ಈ ಸಮ್ಮೇಳನದ ಮತ್ತೊಂದು ವೈಶಿಷ್ಟ್ಯಪೂರ್ಣಕಾರ್ಯಕ್ರಮ. ಯುರೋಪ್, ಅಮೇರಿಕಾ, ಆಸ್ಟ್ರೇಲಿಯಾ ದೇಶಗಳ ಜೊತೆಗೆ ಅನೇಕ ಏಷ್ಯಾರಾಷ್ಟ್ರಗಳ ಕನ್ನಡಿಗರು ನೆರೆದಿದ್ದರು. ಅವರೊಡನಾದ ಸ್ನೇಹ-ಪರಿಚಯ ಪರಸ್ಪರಕ್ರಿಯೆ ಬಹಳ ಕಾಲ ಉಳಿಯುವಂಥದು. ನಾನು ಬಹಳಷ್ಟು ವಿದೇಶಿ ಕನ್ನಡಿಗರನ್ನು ಪರಿಚಯಿಸಿಕೊಂಡು ಅವರ ದೇಶಗಳಲ್ಲಿ ಜರುಗುತ್ತಿರುವ ಕನ್ನಡ ಕಲಿಸುವಂಥ ಶಾಲೆಗಳ ಬಗ್ಗೆ, ಕನ್ನಡ ಸಾಂಸ್ಕೃತಿಕ ಚಟುವಟಿಕೆಗಳ ಬಗ್ಗೆ ತಿಳಿದುಕೊಂಡೆ. ನಾವು ರಾಜ್ಯ ದೇಶ ಬಿಟ್ಟುಹೋಗಿದ್ದರೂ, ನಮ್ಮ ಕನ್ನಡ ನಮ್ಮೆಲ್ಲರನ್ನೂ ಒಂದುಗೂಡಿಸುತ್ತಿರುವ ಪರಿ ಎಲ್ಲರಿಗೂ ಅಗಾಧ ಸಂತಸ ತಂದಿರುವುದನ್ನ ಎಲ್ಲರಲ್ಲೂ ಕಂಡೆ. ಮುಂದೆ ನಾವೆಲ್ಲ ಸೇರಿ ಯಾವ ರೀತಿಯ ಕೊಡುಗೆ ಕೊಡಲು ಸಾಧ್ಯ ಅನ್ನುವುದನ್ನು ಕೂಲಂಕಶವಾಗಿ ಚರ್ಚಿಸಿ ಕಾರ್ಯಗತ ಮಾಡುವುದಕ್ಕೆ ಅನುವು ಮಾಡಿಕೊಟ್ಟಿದೆ ಕನ್ನಡ ಸಾಹಿತ್ಯ ಸಮ್ಮೇಳನ.

ಒಟ್ಟಿನಲ್ಲಿ ಈ ಸಮ್ಮೇಳನ ನನಗೊಂದು ಅಪೂರ್ವ ಅನುಭವ!

- ನವೀನ
*******************************************
ಆಕಾಶದ  ಆಶೆ -ಹೊಸ ವರುಷಕೆ!

(ಮುನ್ನುಡಿ: ಹೊಸವರ್ಷವೆಂದರೆ ನನಗೆ ಅದರಲ್ಲಿ ಕಂಡಿದ್ದು ಬರೇ ಅಂದಿನ ಮೈಮರೆತಂತ ಗಳಿಗೆಗಳಲ್ಲ; ಆದರೆ ಹಿಂದಿನ ದಿನಗಳ ನೋವು, ಮುಂದಿರುವ ಅನಿರ್ದಿಷ್ಟದ ಚಿಂತೆ. ಹಾಗೆಯೇ ಸಮತೋಲನದಲ್ಲಿ ಅವಲೋಕಿಸಿದಾಗ, ನನ್ನ ಮನಸ್ಸಿನಲ್ಲಿ ಆನಂದದಕ್ಕಾಗಿ ಆಕಾಶ ಬಯಸಿದ್ದೇನಿರಬಹುದೆಂಬ ಆ ಅವಲೋಕನದ ಚಿತ್ರಣ ಇಲ್ಲಿರಬಹುದು, ನೋಡಿ ತಿಳಿಸಿ; ಆದಿ-ಅಂತ್ಯಗಳ ನಡುವೆ ತುಂಬಿ ಸಂಬಂಧ ಕಲ್ಪಿಸಿದ್ದು ಅಂತರಂಗದ ಗಂಗೆ ಹರಿದು ಮಂದಹಾಸದಲ್ಲಿ ಮನೆಮಾಡಿದಂತಿತ್ತು, ಎನ್ನುವ ಭಾವವನ್ನು ಹಿಡಿಯಲು ಮಾಡಿದ ನನ್ನ ಕಿರು ಪ್ರಯತ್ನ, ನಿಮಗೆ ಹೇಗನ್ನಿಸಿತೋ ಕೇಳುವ ಕುತೂಹಲ! ಸಹನೆಯಿಂದ ಓದಿ ಪ್ರತಿಕ್ರಿಯಿಸುವಿರೆಂದು ನಂಬಿದ್ದೇನೆ – ಗೋಪಾಲಕೃಷ್ಣ ಹೆಗ್ಡೆ)

*****************************

ನೋವಿನಲ್ಲಿ ಕೂಡಿತ್ತೆ ೨೪ರ ಇತಿಹಾಸ?
ಮತ್ತೆ
ನಾಡೆಲ್ಲ ನೋಡಲಿಕ್ಕಿದೆ ೨೫ರ ಪರದೆ-
೨೬ಕ್ಕೆ ಮೊದಲು ಪರದಾಟ,
ನಂಬಲಾರದ ಸತ್ಯ
ಗೊತ್ತಿದ್ದರೂ
ಮೊದಲ ದಿವಸವೇ ಹೊಸವರುಷವನ್ನೆಲ್ಲ
ಬೊಗಸೆಯಲ್ಲಿ ಬಿಗಿದಿಟ್ಟ- ಒಂದನೇ ( ಒಂದೇ)
ದಿನದ ಇದು ಎಂಥಾ ವಿಪರ್ಯಾಸ-ಆಭಾಸ
ಸುಗ್ಗಿ ಕೋಲಾಟ !

ಯಾಕೋ ಈ ಮೌನದಲಿ
ಮೂಡಿದೆ ಮಂದಹಾಸ
- ಹಾರಿರುವೆ ಗರಿಬಿಚ್ಚಿ ಅರಳಿದ
ನೀ,
ನನ್ನ ನೀಲಿ ಆಕಾಶದ ಆಶೆ
ತೋರಿಸಿದೆ ದಿಗಂತ- ಅವಕಾಶ
ಮತ್ತೆ- ಮತ್ತೆ
ಹೀಗೆ
ಆಶಿಸಿಸಿದೆ ನೀಲಿತುಂಬಿರಲಿ - ಶುಭ್ರ
ಅಂತರಂಗ ಅದು
ನಿತ್ಯಾನಂದ, ಕಾವ್ಯಾನಂದದಂತಿರಲಿ
ಸದಾ ಈ ಬ್ರಹ್ಮಾಂಡ ಗುಂಡಿ
ಬಂಡಿ -
ಉಕ್ಕುತ್ತಿರಲಿ
ಸದಾ ಚೆಂದ ತಂದ ಅದು
ಬ್ರಹ್ಮಾನಂದ ಆಗಲಿ,
ಆದಿ - ಅಂತ್ಯಗಳ
ನಡುವೆ
ತುಂಬಿ ಈ,
ಅಂತರಂಗ - ಗಂಗೆ
ಹರಿಯಲಿ ಹರಿದ್ವಾರ
ವರ್ಷತುಂಬ 🙏💐🎊

- ಗೋಪಾಲಕೃಷ್ಣ ಹೆಗ್ಡೆ
*******************************************
ದೇವ - ದಾನವರಿಲ್ಲ, ಸಮುದ್ರಮಥನವೂ ಇಲ್ಲ;
ಹಾಲಾಹಲವಂತೂ ಮೊದಲೇ ಇಲ್ಲ.
ಲಕ್ಷ್ಮೀ ಚಂದ್ರರು ಇಲ್ಲ,
ಧನ್ವಂತರಿಯ ಸುಳಿವಿಲ್ಲ;
ಅಮೃತ ಕಲಶವದೊಂದೇ ಇರುವುದಲ್ಲ!
ಕೇಳು ಜನಮೇಜಯ, ಒಳ್ಳೆಯದ ಹೊರತರಲು ಉಳಿದೆಲ್ಲ ಬೇಕಿಲ್ಲ,
ಮನವದೊಂದಿದ್ದರೆ ಸಾಕಲ್ಲ!

- ಲಕ್ಷ್ಮೀನಾರಾಯಣ ಗುಡೂರ.
*******************************************