ಹೊರನಾಡಿನ ಕನ್ನಡಿಗರು:  ಅಜ್ಜಿ – ಮೊಮ್ಮಗಳ ಸಂವಾದ; ವತ್ಸಲಾ ರಾಮಮೂರ್ತಿ ಬರೆದ ಲೇಖನ

ಸಮಸುಖಿ (ಸಮದುಃಖಿ) ಕನ್ನಡಿಗರಿಗೆ ಸಬ್ಸ್ಟಿಟ್ಯೂಟ್ ಸಂಪಾದಕನ ನಮಸ್ಕಾರಗಳು.  ಕೆಳಗೆ ಬರೆದಿರುವ ಸಂವಾದ ಬರಿಯ ಲೇಖಕಿಯದಲ್ಲ, ಅದು ನಮ್ಮಲ್ಲಿ ಅನೇಕರ ಜೀವನದಲ್ಲಿ ಒಮ್ಮೆ ಬರಬಹುದಾದ ಘಳಿಗೆ.  ಇದು ಬರಿಯ ಕನ್ನಡಿಗರಿಗೆ ಮಾತ್ರವಲ್ಲ, ಯಾವ ವಲಸಿಗರಿಗೂ ಬರಬಹುದಾದ ಪ್ರಶ್ನೆ. ಓದಿ, ನಿಮ್ಮ ಸ್ವಂತದ ಅಥವಾ ಕೇಳಿದ / ನೋಡಿದ ಅನುಭವವೇನಾದರೂ ಇದ್ದರೆ, ಹಂಚಿಕೊಳ್ಳಿ - ಸಂ. 
*****************************************
ನನ್ನ  ಮೊಮ್ಮಗಳು ನನ್ನನ್ನು ಒಂದು question ಕೇಳಿದಳು “ಅಜ್ಜಿ ನಾನು ಯಾರು? ನೀನು ಎಲ್ಲಿಂದ ಬಂದೆ?  ಯಾಕೆ ಬಂದಿ?”
ಅವಳಿಗೆ ಕೂಡಲೆ ಉತ್ತರ ಕೊಡಲು ಹೊಳೆಯಲ್ಲಿಲ್ಲ.  ತುಸು ತಡೆದು “ಮೊಮ್ಮಗಳೇ, ನಮ್ಮ ಚರಿತ್ರೆಯನ್ನು ಕೇಳುವಂತವಳಾಗು.”
“ಹಾಗಾದರೆ ಅಜ್ಜಮ್ಮ, ನಿಮ್ಮ ಊರು, ಸಂಸ್ಕೃತಿಯನ್ನು ವಿವರವಾಗಿ ತಿಳಿಸು” ಎಂಬುದಾಗಿ ಕೇಳಲು, ಕೆಳ ಕಂಡ ಕತೆ ಹೇಳಿದೆ.
“ನಾವು ಹೊರನಾಡಿನ ಕನ್ನಡಿಗರು.  ನಾವು ವಲಸೆ ಬಂದವರು.”

“ಹಾಗಾದರೆ ಬೆಂಗಳೂರಿನಿಂದ ಮುಂಬಯಿ, ಚೆನ್ನೈ ಮುಂತಾದ ಪ್ರದೇಶಕ್ಕೆ ಹೋಗುತ್ತಾರಲ್ಲ? ಅವರೆಲ್ಲಾ ವಲಸೆ ಹೋದವರೇ?”
“ಹೌದು ಬಂಗಾರಿ, ಅವರೊಬ್ಬರೇ ಅಲ್ಲ.  ಅಮೆರಿಕ, ಇಂಗ್ಲಂಡ್‌, ಇನ್ನೂ ಬೇರೆ  ಬೇರೆ ದೇಶಕ್ಕೆ ನಮ್ಮ ಕನ್ನಡನಾಡಿನಿಂದ ಹೋದವರೆಲ್ಲಾ ವಲಸೆ ಹೋದವರೇ.” 
“ಪರದೇಶಕ್ಕೆ ಕೆಲಸ ಹುಡಿಕಿಕೊಂಡು ಬಂದವರೇ ಹೆಚ್ಚು. ಕೆಲಸ ಸಿಕ್ಕಿದ ಮೇಲೆ ಮನೆ, ಸಂಸಾರ ಎಲ್ಲಾ ಮಾಡಿಯಾಯಿತು.”

“ಹಾಗಾದರೆ ನೀವೆಲ್ಲಾ ಸಂತೋಷವಾಗಿ ಇದ್ದೀರಾ?  ನಿಮಗೆ ನಿಮ್ಮ ಭಾಷೆ, ಪರಂಪರೆ, ಚರಿತ್ರೆ, ಹಬ್ಬ-ಹುಣ್ಣಿಮೆಗಳು ಮಿಸ್ಸಾಗುತ್ತಾ?” ಎಂದು ಕೇಳಿದಳು.
“ಹೌದು ಕಣೆ ಖಂಡಿತವಾಗಲೂ ಮಿಸ್ಸಾಗುತ್ತದೆ.  ವಲಸೆ ಬಂದವರು ತುಂಬಾ ಜನ ಒಳ್ಳೆಯ ಕೆಲಸ, ಹಣ ಸಂಪಾದನೆ ಮಾಡಿ ಗೌರವಾಗಿ ಬಾಳುತ್ತಿದ್ದಾರೆ.  ಆದರೆ ನಮಗೆ ನಮ್ಮದು, ನಮ್ಮ ಬಾಲ್ಯದ ಅನುಭವಗಳನ್ನು ಮರೆಯಲು ಸಾಧ್ಯವೇ?  ನಮ್ಮ ಪರಂಪರೆ, ನಮ್ಮ ಭಾವನೆಗಳನ್ನು ಅಳಿಸಲು ಸಾಧ್ಯವೇ?  ಅದೇ ಅಲ್ಲವೇ ನಮ್ಮ ವ್ಯಕ್ತಿತ್ವಕ್ಕೆ ಅಡಿಪಾಯ.  ಅಡಿಪಾಯವನ್ನು ಮುರಿಯಲು ಸಾಧ್ಯವೇ?  ಮುರಿದರೆ ನಮ್ಮ ಬದುಕು ಬರಡಲ್ಲವೇ, ನಮ್ಮ ವ್ಯಕ್ತಿತ್ವ ಒಂದು ದೊಡ್ಡ ಅಂಶವನ್ನ ಕಳೆದ ಹಾಗಲ್ಲವೇ?”

ಮತ್ತೊಂದು ಸವಾಲು – “ನಿಮಗೆ ಕನ್ನಡ ಬಳಗ ಯಾಕೆ ಬೇಕು?”
“ನಮ್ಮ ವ್ಯಕ್ತಿತ್ವದ ಅಡಿಪಾಯಕ್ಕೆ ಆಸರೆ ಬೇಡವೇ?  ನಾವು ಒಂದು ಸಂಘದಲ್ಲಿಯಿದ್ದೇವೆ.  ನಾವು ಭಾಷೆ, ಚರಿತ್ರೆ, ವಾತ್ಯಲ್ಯ ಮುಂತಾದ ಮಾನವೀಯ ಗುಣಗಳನ್ನು ಹಂಚಿಕೊಳ್ಳುತ್ತೇವೆ.  ಈ ಹೊರನಾಡಿನ ಸಂಘಗಳು ನಮ್ಮ ವ್ಯಕ್ತಿತ್ವಕ್ಕೆ ಒಂದು meaning ಕೊಡುತ್ತದೆ.  ನಾವು ವಲಸೆ ಬಂದ ದೇಶಕ್ಕೆ ಹೊಂದಿಕೊಂಡರೂ, ಈ ಹೊರನಾಡು ನಮ್ಮದು ಎನಿಸಲು ಕಷ್ಷ ಅನಿಸುತ್ತದೆ.  ನಮಗೆ chipsಗಿಂತ ಕೋಡುಬಳೆ ರುಚಿಯಲ್ಲವೇ?”

ಮತ್ತೊಂದು ಕ್ವೆಶ್ಚನ್ನು – “ಸರಿ ಇಲ್ಲಿಗೆ ಬಂದಿರಿ. ನಿಮ್ಮ ಜೀವನ ಕಟ್ಟಿದಿರಿ. ಮಕ್ಕಳು, ಮರಿಗಳಾದವು.  ನಮ್ಮ ವಂಶ ಬೆಳೆಯುತ್ತಿದೆ.
ಈಗ ನಾವು ೩ನೆ ಜನರೇಶನ್ನು.  ಮೊದಲನೆಯದು ನೀವು; ಹೊರನಾಡಿಗೆ ಬಂದು ನಿಮ್ಮ ಭಾಷೆ, ಸಂಸ್ಕೃತಿ ಬೆಳಿಸಿ, ಉಳಿಸಿಕೊಂಡಿರಿ.

“ಎರಡನೆ ಜನಾಂಗ ನಿಮ್ಮ ಮಕ್ಕಳು. ನನ್ನ ತಂದೆ-ತಾಯಿಯರು. ಇಲ್ಲೇ ಹುಟ್ಟಿ ಬೆಳದವರು.  ಅವರು ನಿಮ್ಮ ಅಡುಗೆ ತಿಂಡಿ ಎಲ್ಲ ಮಜವಾಗಿ ತಿನ್ನುತ್ತಾರೆ. ಮನೆಯಲ್ಲಿ ನಿಮ್ಮ ಮಾತು ಕೇಳಬಹುದು. ಮನೆಯ ಹೊರಗೆ ಅವರು ಈ ದೇಶದ ಜನರನ್ನೇ ಅನುಸರಿಸುತ್ತಾರೆ.  ಕನ್ನಡ ಮಾತನಾಡಲು ಬರುವುದಿಲ್ಲ.  ಚಿಕ್ಕವರಾಗಿದ್ದಾಗ ಕನ್ನಡ ಕಲಿಯಲು ನೀವು ಸಹಾಯಮಾಡಲಿಲ್ಲ. ಅವರು ಕುವೆಂಪು, ದ ರಾ ಬೇಂದ್ರೆಯಂಥವರ ಹೆಸರು ಕೇಳಿಲ್ಲ.  ಅವರಿಗೆ ನಿಮಗೆ ಇರುವಷ್ಟು ಮಮತೆ ನಿಮ್ಮ ಪರಂಪರೆ ಮೇಲೆ ಖಂಡಿತಯಿಲ್ಲ.  ಅವರು ಕನ್ನಡ ಬಳಗಕ್ಕೆ ಬರುವುದಿಲ್ಲ.  ಬಂದರೂ, ‘we don’t understand anything’ ಅಂತಾರೆ.

ಮೂರನೆಯ ಜನಾಂಗ ನಿಮ್ಮ ಮೊಮ್ಮಕ್ಕಳು. ಅವರ ಬಗ್ಗೆ ಮತ್ತೊಂದು ಸವಾಲು.
“ಅಜ್ಜಿ ನಮಗೆ ನಿಮ್ಮ ಭಾಷೆ ಗೊತ್ತಾಗುವುದಿಲ್ಲ.  ಬೆಂಗಳೂರಿಗೆ ಒಂದೇ ಸಲ ಮಮ್ಮಿ ಡ್ಯಾಡಿ ಜತೆ ಹೋಗಿದ್ದೆ.  ಎಲ್ಲರೂ Englishನಲ್ಲೇ ಮಾತಾಡಿದರು.  ಮಮ್ಮಿ ಡ್ಯಾಡಿ ಕನ್ನಡ ಮಾತನಾಡುವುದಿಲ್ಲ.  ಅವರಿಗೆ ಬರಲ್ಲ ಅಂತಾರೆ.  ಹಬ್ಬ, ಹರಿದಿನ ಮಾಡುವುದಿಲ್ಲ.  ನಾವು ಏನು ಮಾಡಬೇಕು?  ಬ್ರಿಟಿಶ್ ಜನರಂತೆ ಇರಬೇಕೆ?”

“ಇದಲ್ಲದೆ ಮತ್ತೊಂದು ಗುಂಪಿದೆ ಈಗ. ಇವರು ಇತ್ತೀಚಿಗೆ ಹೊರನಾಡಿಗೆ ವಲಸೆ ಬಂದವರು.  ಹೊಸ ಟೆಕ್ನಾಲಜಿ ತಿಳಿದವರು. ಅವರೊಡನೆ ನಮ್ಮ ಮೊದಲನೆ ಜನಾಂಗ (ಹಿರಿಯರು, ೩೦-೪೦ವರುಷಗಳಿಂದ ಹೊರನಾಡಿನಲ್ಲಿ ಇರುವವರು) ಬಾಂಧವ್ಯ ಬೆಳಸಲು ಸಾದ್ಯವೇ?”

“ನನ್ನ ಕತೆ ಮುಗಿಯಿತು. ನಿನ್ನ ಸವಾಲಿಗೆ ನನ್ನ ಹತ್ತಿರ ಉತ್ತರವಿಲ್ಲ!”

- ವತ್ಸಲಾ ರಾಮಮೂರ್ತಿ

*****************************************************

ಕವನ ಗುಚ್ಛ: ವಿ.ಕೆ. ಭಗವತಿ ಹಾಗೂ ಅಮರಪ್ರೇಮ (ಭಾಗ-೨): ಕೇಶವ ಕುಲಕರ್ಣಿ

ಅನಿವಾಸಿ ಸತತವಾಗಿ ಇಂದು ತನ್ನ ಐನೂರನೇ ಸಂಚಿಕೆಯನ್ನು ಪ್ರಕಟಿಸುತ್ತಿದೆ. ನಮ್ಮೆಲ್ಲರಿಗೂ ಇದು ಹೆಮ್ಮೆಯ, ಸಂತೋಷದ ವಿಷಯ. ಈ ಸಾಧನೆಯ ಹಿಂದೆ ಅನಿವಾಸಿ ಸದಸ್ಯರ ಅವಿರತ ಶ್ರಮವಿದೆ, ಕಣ್ಣೀರಿದೆ, ಕಕ್ಕುಲತೆಯಿದೆ, ಕನ್ನಡ ನಾಡಿನ – ಭಾಷೆಯ ಮೇಲಿನ ಅಪಾರ ಪ್ರೇಮವಿದೆ.

ತಾಯ್ನಾಡಿನ ಕೊಂಡಿಯನ್ನು ಪ್ರತಿನಿಧಿಸುತ್ತಿರುವವರು ಅತಿಥಿ ಕವಿ ಡಾ. ವಿ.ಕೆ. ಭಗವತಿ. ವಿಕೆಬಿ, ವೃತ್ತಿಯಲ್ಲಿ ವೈದ್ಯರು. ಈಗಿನ ಗದಗ ಜಿಲ್ಲೆಯಲ್ಲಿರುವ ರೋಣ ತಾಲೂಕಿನ ಲಕ್ಕಲಕಟ್ಟಿಯಲ್ಲಿ ಹುಟ್ಟಿ, ಹುಬ್ಬಳ್ಳಿಯ ಕೆ ಎಂ ಸಿ ಯಲ್ಲಿ ಸ್ನಾತಕ, ಸ್ನಾತಕೋತ್ತರ ಪದವಿ ಪಡೆದು, ಹಾವೇರಿಯಲ್ಲಿ ವೃತ್ತಿ ನಿರತರಾಗಿದ್ದರು. ಮೊದಲಿನಿಂದಲೂ ಸಾಹಿತ್ಯ, ನಾಟಕ, ಸಂಗೀತ ಹಾಗು ಸುತ್ತುವ ಹವ್ಯಾಸವಿರುವ ವಿಕೆಬಿ, ಕನ್ನಡ ಹಾಗೂ ಉರ್ದುಗಳಲ್ಲಿ ಕವನ, ಗಝಲ್ ಗಳನ್ನ ರಚಿಸಿದ್ದಾರೆ. ವೃತ್ತಿಯಿಂದ ನಿವೃತ್ತರಾದಮೇಲೆ, ದೇಶ ವಿದೇಶಗಳ ಪ್ರವಾಸ ಮುಗಿಸಿ, ಶಿರಸಿಯ ಹತ್ತಿರದ ಹಳ್ಳಿಯೊಂದರಲ್ಲಿ ಕೃಷಿಯನ್ನು ಪ್ರವೃತ್ತಿಯನ್ನಾಗಿಸಿಕೊಂಡು ಜೀವನದ ಎರಡನೇ ಇನ್ನಿಂಗ್ಸ್ ಆಡುತ್ತಿದ್ದಾರೆ. ರೈತ ಮನೆತನದಲ್ಲಿ ಹುಟ್ಟಿದ ವಿಕೆಬಿ ಅವರ ಕವನಗಳಲ್ಲಿ ಮಣ್ಣಿನ ಸಾಮೀಪ್ಯತೆಯ ಅರಿವಾಗುತ್ತದೆ. ಅವರ ವಿಭಿನ್ನ ರೀತಿಯ ಪದಗಳ ಬಳಕೆ; ಗಝಲ್ ಶೈಲಿ ನಿಮ್ಮ ಗಮನಕ್ಕೆ ಬರಬಹುದು ಈ ಮೂರು ಕವನಗಳಲ್ಲಿ.

ಐನೂರನೇ ಸಂಚಿಕೆಯ ಇಂಗ್ಲೆಂಡಿನ ಪ್ರತಿನಿಧಿಯಾಗಿ ಎರಡನೇ ಭಾಗದಲ್ಲಿ ಓದುಗರು ಕಾತುರದಿಂದ ಕಾದಿರುವ ಕೇಶವ್ ಬರೆದಿರುವ ‘ಅಮರ ಪ್ರೇಮ’ ಕಥೆಯ ಮುಂದಿನ ಕಂತಿದೆ. ಅಮರನ ‘ಪ್ರೇಮ’ ಸಿಕ್ಕಳೇ? ಆತನ ಪ್ರೇಮ ಗಗನ ಕುಸುಮವಾಗಿಯೇ ಉಳಿಯಿತೇ? ನಿಮ್ಮ ಪ್ರಶ್ನೆಗಳಿಗೆ ಉತ್ತರ ಸಿಕ್ಕೀತೇ ಯಾ ಕೇಶವ್ ಇನ್ನೂ ನಿಮ್ಮನ್ನು ಕೌತುಕದ ಸುಳಿಯಲ್ಲಿ ಸಿಕ್ಕಿಸಿ ಒದ್ದಾಡಿಸುವರೇ? – ರಾಂ

ವಿ ಕೆ ಭಗವತಿಯವರ ಮೂರು ಕವನಗಳು

ಜೀವನ

ಬಿತ್ತಲು ಬೇಕಾದ ಮಣ್ಣು ಕತ್ತಲು

ನನ್ನಲಿ ಕೈತುಂಬಾ ಕಾಳು ಬಿತ್ತಲು

ಆಸೆ ಅಂಜಿಕೆ ಬಿಟ್ಟರೆ ನೀ ಬೆತ್ತಲು

ವಿಜಯಕೇ ಬೇಕಾದ ಮೆಟ್ಟಲು ಹತ್ತಲು

ದಾಟದೇ ಹಾಯಾದ ಗೆರೆಗಳ ಸುತ್ತಲು

ಬುಗ್ಗೆಯೇ ಬೇಕೇನು ಬದುಕಿನ ಬಟ್ಟಲು

ಅಂಕೆ ಸಂಖೆಯ ಆಟದೆ ನಿನ ಎತ್ತಲು

ಸಂಜೆಯಾಯಿತು ಕಣ್ಣ ಮುಚ್ಚಲು ಕತ್ತಲು

ಮದುವೆ

ನಿನ್ನ ಬಳುಕು ಮೈ ಮೋಹನವಾದರೆ

ಮುರಳಿಯಾಗದಿರುವುದೇ ನನ್ನ ಮನ

ಕೊಳವಿದೆ ಅಲ್ಲಿ ನನ್ನ ಅಂಗಳದಲ್ಲಿ

ಅದರೊಳಗೆ ಮುಳುಗಿ ಮಿಂದು ಬಾ

ಬಿಗುಮಾನಗಳ ಕಳೆದು, ತೊಳೆದು

ಗಂಟು ಗುಣಿಕೆಗಳ ಸಡಿಲಿಸಿ ಬಾ

ದಿಂಡೆ ಬಾಳೆಯಂತಾದರೆ ನಿನ್ನ ಕಾಲಿಗೆ

ನೂರಡಿಯಾಗದೇನು ನನ್ನ ಜೊಲ್ಲು ನಾಲಿಗೆ

ಕೈಗೆ ಕೈಯಿಟ್ಟು, ಬಾಯಿಗೆ ಮುತ್ತಿಟ್ಟರೆ ನೀನು

ನಾಳೆ ನಾಳೆಗಳಿಗೆ ತೊತ್ತಿಡುವೆ ನಾನು

ಮೋಹನವಲ್ಲದ ಮೈ, ದಿಂಡಲ್ಲದ ಕಾಲ್ಗಳಿದ್ದರೆ

ಹಸಿರಾಗು ನೀ ಹೆಮ್ಮರವಾಗಿ

ಮುರಳಿಯಾಗದ ನನ್ನ ಮನ

ಟೊಂಗೆ ಟೊಂಗೆ ಜಿಗಿಯುವುದು ಮರ್ಕಟವಾಗಿ

ಪಯಣ

ಪಯಣದ ರೀತಿ ನೀತಿ ಸರಳ ಶುದ್ಧ ದಾರಿಯಾಗಿದೆ

ಇನ್ನೂ ಸ್ವಲ್ಪ ಕ್ರಮಿಸಿ ನೋಡೋಣ

ಅಲ್ಪ ವಿರಮಿಸಿ, ಶ್ರಮಿಸಿ ನೋಡೋಣ

ಸಂಬಂಧಗಳಡಿ ಬಂಧಿಯಾಗಲಾತುರವೇಕೆ

ಸಡಿಲ ದಾರಗಳ ಮೇಲೆ ಕಟ್ಟಿದ ಸೇತುವೆ ಬೀಳಿಸಲು ಒಂದೇ ಪ್ರಶ್ನೆ ಯಾಕೆ

ಬಂಧಗಳ ಸಾರ ಕರಗಿದಾಗ ದಾರ ಹರಿಯದೆ?

ಆ ದಿನ ಬಂದಾಗ, ಬಗ್ಗದ ಈ ಬಿದಿರು ಮುರಿಯದೆ?

ದಾರದ ಸತ್ವ ಕರಗುವ ಮುನ್ನ ಸ್ವಲ್ಪ ತಗ್ಗಿಸಿ ನೋಡೋಣ

ಬೆದರದ ಬಿದಿರು ಮುರಿಯುವ ಮುನ್ನ ಸ್ವಲ್ಪ ಬಗ್ಗಿಸಿ ನೋಡೋಣ

ಹೇಳಲು ಒಂದು ಮನೆಯಿದೆ, ಬೇರೆಯಲ್ದು ಒಂದು ಭ್ರಮೆಯಿದೆ

ಬೇರೆಯಾದ ಭ್ರಮೆಯಾಚೆ, ಅಗಣಿತ ಅಪರಿಮಿತ ನಲುಮೆಯಿದೆ

ನೀ ನಡೆಯಲೊಪ್ಪದ ದಾರಿಯ ಕೊನೆಯಲ್ಲಿ ಮಸಣವಿದೆ

ನೀ ಓಡುವ ಗೆಲುವಿನ ದಾರಿ ಅದೇ ಅಲ್ಲವೇ

ಸಂಕುಚಿತ ಸೀಮೆಗಳಿಂದಾಚೆ ಅವಕಾಶಗಳ ಎನಿಸಿ ನೋಡೋಣ

ಅಲ್ಲಿಗೆ ಹತ್ತಿರದ ದಾರಿ ಬಿಟ್ಟು ಸುತ್ತದ ದಾರಿ ಬಳಸಿ ನೋಡೋಣ

ಪಯಣದ ರೀತಿ ನೀತಿ ಸರಳ ಶುದ್ಧ ದಾರಿಯಾಗಿದೆ

ಇನ್ನೂ ಸ್ವಲ್ಪ ಕ್ರಮಿಸಿ ನೋಡೋಣ

ಅಲ್ಪ ವಿರಮಿಸಿ, ಶ್ರಮಿಸಿ ನೋಡೋಣ

ಅಮರಪ್ರೇಮ (ಕತೆ): ಕೇಶವ ಕುಲಕರ್ಣಿ (ಎರಡನೇ ಕಂತು)

ಮೊದಲ ಕಂತನ್ನು ಇನ್ನೂ ಓದಿಲ್ಲದಿದ್ದರೆ, ಓದಲು ಇಲ್ಲಿ ಒತ್ತಿ

ಭಾಗ 2: ಇಸ್ವಿ 1989

ಅಮರನಿಗೆ ಪ್ರೇಮಾಳನ್ನು ನೋಡುವ ಅದಮ್ಯ ಹಂಬಲ ಮತ್ತೆ ಹುಟ್ಟಿದ್ದು, ತನ್ನ ಮಗುವಿನ ನಾಮಕರಣದ ಸಮಯದಲ್ಲಿ.  

ಅಮರ ಮತ್ತು ಉಷಾ ತಮ್ಮ ಹೆಣ್ಣುಮಗುವಿಗೆ ಹೆಸರು ಹುಡುಕುತ್ತಿದ್ದರು. ಹುಟ್ಟುವ ಮೊದಲು ಮಗು ಗಂಡೋ ಹೆಣ್ಣೋ ಗೊತ್ತಿರಲಿಲ್ಲ. ಗರ್ಭದಲ್ಲಿನ ಮಗು ಗಂಡೋ ಹೆಣ್ಣೋ ಎಂದು ಪತ್ತೆ ಮಾಡುವುದು ತನ್ನ ಆದರ್ಶದ ವಿರುದ್ಧವೆಂದು ಅಮರ ಬಗೆದಿದ್ದ (ಆಗಿನ್ನೂ ಕಾನೂನು ಅಷ್ಟು ಗಡುಸಾಗಿರಲಿಲ್ಲ) . ಮಗುವಿನ ಹೆಸರನ್ನು ಮಗು ಹುಟ್ಟುವ ಮೊದಲು ನಿರ್ಧಾರ ಮಾಡಿದರೆ ಅಪಶಕುನವೆಂದು ಉಷಾ ನಂಬಿದ್ದಳು. 

ಹೆಣ್ಣು ಮಗು ಹುಟ್ಟಿ ಮೂರು ವಾರದ ಬಳಿಕ ಗಂಡ ಹೆಂಡತಿ ಇಬ್ಬರೇ ಮಗುವಿಗೆ ಏನು ಹೆಸರು ಇಡುವುದೆಂದು ಒಂದು ಚಂದದ ಜಗಳವಾಡುತ್ತಿದ್ದರು. ಅಮರ ಮಗುವನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡಿದ್ದ. ಉಷಾ ಒಂದು ಹೆಸರು ಹೇಳುವುದು, ಅದಕ್ಕೆ ಅಮರ ಏನಾದರೂ ತಗಾದೆ ತೆಗೆಯುವುದು, ಅಮರ ಒಂದು ಹೆಸರು ಹೇಳುವುದು, ಅದಕ್ಕೆ ಉಷಾ ಮೂಗು ಮುರಿಯುವುದು, ಅವಳು ಹೇಳಿದ ಹೆಸರನ್ನು ಚಿಕ್ಕದಾಗಿ ಕರೆದರೆ ಚೆನ್ನಾಗಿರುವುದಿಲ್ಲ ಎಂದು ಇವನು ಹೇಳುವುದು, ಇವನು ಹೇಳಿದ ಹೆಸರಿನ ಮೊದಲ ಅಕ್ಷರದ್ದೋ ಕೊನೆಯ ಅಕ್ಷರದ್ದೋ ಉಚ್ಚಾರ ಸರಿ ಇಲ್ಲ ಎಂದು ಇವಳು ಹೇಳುವುದು ನಡೆಯುತ್ತಿತ್ತು. 

ಹೀಗೆ ವಾದ ನಡೆಯುತ್ತಿರಬೇಕಾದರೆ, ಉಷಾ, `ಪ್ರೇಮಾ ಎನ್ನುವ ಹೆಸರು ಹೇಗೆ?` ಎಂದಳು. ಉಷಾ `ಓಂ` ಮತ್ತು `ನಮ್ಮೂರ ಮಂದಾರ ಹೂವೇ` ಸಿನೆಮಾಗಳಲ್ಲಿ ನಟಿಸಿದ ಪ್ರೇಮಾಳ ಫ್ಯಾನ್ ಆಗಿದ್ದಳು. ಅಮರನ ಕಣ್ಣುಗಳಲ್ಲಿ ಒಂದು ಸಾವಿರ ವ್ಯಾಟಿನ ಮಿಂಚು ಮಿನುಗಿತು, ಮುಖದಲ್ಲಿ ಒಂದು ಕ್ಷಣ ಚಹರೆಯೇ ಬದಲಾಯಿತು; ಆದರೆ ತಕ್ಷಣವೇ ಸಾವರಿಕೊಂಡು `ಉಹುಂ, ಚೆನ್ನಾಗಿಲ್ಲ, ತುಂಬಾ ಹಳೆಯ ಹೆಸರು,` ಎಂದ. ಆದರೆ ಉಷಾ ಅವನ ಕಣ್ಣುಗಳಲ್ಲಿ ಮೂಡಿದ ಮಿಂಚನ್ನು, ಮುಖದ ಚಹರೆ ಬದಲಾದದ್ದನ್ನು ಗಮನಿಸಿದ್ದಳು, ಅವನಿಗೆ ‘ಪ್ರೇಮಾ` ಎನ್ನುವ ಹೆಸರು ಇಷ್ಟವಾಗಿದೆ, ಸುಮ್ಮನೇ ತನ್ನನ್ನು ಸತಾಯಿಸಲು ಇಷ್ಟವಿಲ್ಲ ಎಂದು ಸುಳ್ಳು ಹೇಳುತ್ತಿದ್ದಾನೆ ಎಂದುಕೊಂಡಳು. `ಪ್ರೇಮಾ ಎನ್ನುವ ಹೆಸರು ತುಂಬ ಚೆನ್ನಾಗಿದೆ, ಇವಳು ನಮ್ಮಿಬ್ಬರ ಪ್ರೇಮದ ಫಲವಲ್ಲವೇ?` ಎಂದು, `ಪ್ರೇಮಾ` ಎನ್ನುವ ಹೆಸರಿನ ಮೇಲೆ ಪಟ್ಟು ಹಿಡಿದಳು. ಅಮರ ಏನೇನೋ ಸಾಬೂಬು ಹೇಳಲು ಹೋದ, ಆದರೆ ಉಷಾ ಪಟ್ಟು ಬಿಡಲಿಲ್ಲ. ಆ ಹೆಸರು ಅವನ ಅಮ್ಮನಿಗೂ ತುಂಬ ಇಷ್ಟವಾಯಿತು. ವಿಧಿಯಿಲ್ಲದೇ ಒಪ್ಪಿಕೊಂಡ. 

ಅದೇ ಸಮಯಕ್ಕೆ ಪುಟ್ಟ ಮಗು ಉಚ್ಚೆ ಮಾಡಿ ಅವನ ಪ್ಯಾಂಟನ್ನೆಲ್ಲ ಒದ್ದೆ ಮಾಡಿತು. ತಕ್ಷಣವೇ ಮಕ್ಕಳ ವಿಭಾಗ ಪೋಸ್ಟಿಂಗಿನಲ್ಲಿ ತಾನು ಮಗುವೊಂದನ್ನು ಪರೀಕ್ಷೆ ಮಾಡಲು ಎತ್ತಿಕೊಂಡಾಗ, ಆ ಮಗು ತನ್ನ ಪ್ಯಾಂಟಿನ ಮೇಲೆ ಉಚ್ಚೆ ಮಾಡಿದಾಗ ಮೂಗಿಗೆ ಬಡಿದ ವಾಸನೆ, ಆಗ ಪಕ್ಕದಲ್ಲೇ ಇದ್ದ ಪ್ರೇಮಾ ನಗು ತಡೆಯಲಾಗದೇ ಐದು ನಿಮಿಷ ನಕ್ಕಿದ್ದು ನೆನಪಾಯಿತು. 

ಅವತ್ತಿನಿಂದ ಮಗಳಿಗೆ `ಪ್ರೇಮಾ` ಎಂದು ನಾಮಕರಣ ಮಾಡುವ ದಿನದವರೆಗೂ ಪ್ರತಿದಿನ ಅಮರನಿಗೆ ಪ್ರೇಮಾಳನ್ನು ನೋಡುವ ಹಂಬಲ ಹೆಚ್ಚಾಗುತ್ತಲೇ ಹೋಯಿತು. ತನ್ನ ಬಳಿಯಿದ್ದ ಪ್ರೇಮಾಳ ಬೆಂಗಳೂರಿನ ನಂಬರಿಗೆ ಫೋನು ಮಾಡಿದ. ಯಾರೂ ಎತ್ತಲಿಲ್ಲ (ಪ್ರೇಮಾಳ ತಾಯಿ ತಂದೆ ಅಮೇರಿಕಕ್ಕೆ ಮಗಳ ಹತ್ತಿರ ಹೋಗಿದ್ದರು). 

ಭಾಗ 3: ಇಸ್ವಿ 1996

ಅಮರನಿಗೆ ಪ್ರೇಮಾಳನ್ನು ನೋಡುವ ಅದಮ್ಯ ಹಂಬಲ ಮತ್ತೆ ಹುಟ್ಟಿದ್ದು, ಅವನ ಎಂ.ಬಿ.ಬಿ.ಎಸ್ ರೂಮ್-ಮೇಟ್ ಮಲ್ಲಿಕಾರ್ಜುನನಿಗೆ ಫೋನು ಮಾಡಿ ಇಟ್ಟ ಮೇಲೆ.  

ಅಮರ ಮೈಸೂರಿನಲ್ಲಿ ಎಂ.ಬಿ.ಬಿ.ಎಸ್ ಮುಗಿಸಿ, ಪುಣೆಯಲ್ಲಿ ಪಿ.ಜಿ ಮಾಡಲು ಹೋದಾಗಲೇ ಮೈಸೂರಿನ ಅವನ ಬಹುತೇಕ ಕ್ಲಾಸ್‍ಮೇಟುಗಳೆಲ್ಲ ಅಮೇರಿಕ ಮತ್ತು ಇಂಗ್ಲಂಡಿಗೆ ಹಾರಲು ತಯಾರಿ ಮಾಡಿದ್ದರು. ಅಮರನ ಬಹುತೇಕ ಕ್ಲಾಸ್‍ಮೇಟುಗಳೆಲ್ಲ ಬೆಂಗಳೂರು ಮೈಸೂರು ಮಂಗಳೂರಿನ ಕಡೆಯವರು ಬೇರೆ. ಉತ್ತರ ಕರ್ನಾಟಕದವರು ಬೆರಳಣಿಕೆಯಷ್ಟು ಮಾತ್ರ ಇದ್ದರು. ಹೀಗಾಗಿ ಇಂಟರ್ನೆಟ್ಟು ಮೊಬೈಲುಗಳಿಲ್ಲದ ಆ ಕಾಲದಲ್ಲಿ ಜಮಖಂಡಿಯ ಅಮರ ಮೈಸೂರು ಬಿಟ್ಟು ಪಿ.ಜಿ ಮಾಡಲು ಪುಣೆ ಸೇರಿದ ಮೇಲೆ ಅವನ ಸಂಪರ್ಕದಲ್ಲಿ ಇದ್ದುದು ಗೋಕಾಕಿನಿಂದ ಬಂದಿದ್ದ ಅವನ ರೂಮ್‍ಮೇಟ್ ಆಗಿದ್ದ ಮಲ್ಲಿಕಾರ್ಜುನನ ಜೊತೆ ಮಾತ್ರ. ಮಲ್ಲಿಕಾರ್ಜುನ ಎಂ.ಬಿ.ಬಿ.ಎಸ್ ಮುಗಿಸಿ ಪಿ.ಜಿ ಮಾಡದೇ ಗೋಕಾಕಿಗೇ ಹೋಗಿ ತಂದೆಯಿಂದ ಇನ್ನೂರು ಎಕರೆ ಜಮೀನಿನ ಉಸ್ತುವಾರಿ ತೆಗೆದುಕೊಂಡು ಪ್ರಾಕ್ಟೀಸನ್ನೂ ಆರಂಭಿಸಿದ್ದ. ಅಮರ ಆರು ತಿಂಗಳು ವರ್ಷಕ್ಕೊಮ್ಮೆ ಜಮಖಂಡಿಗೆ ಬಂದಾಗ ಮಲ್ಲಿಕಾರ್ಜುನನ್ನು ತಪ್ಪದೇ ಭೇಟಿಯಾಗುತ್ತಿದ್ದ. ಮಲ್ಲಿಕಾರ್ಜುನ ಜಮಖಂಡಿಗೆ ಬರುತ್ತಿದ್ದ, ಇಲ್ಲವೇ ಅಮರ ಗೋಕಾಕಿಗೆ ಹೋಗುತ್ತಿದ್ದ. ಹೀಗೆ ಮಲ್ಲಿಕಾರ್ಜುನ ಮೈಸೂರು ಮೆಡಿಕಲ್ ಕಾಲೇಜಿನ ಏಕೈಕ ಕೊಂಡಿಯಾಗಿದ್ದ. ಅಮರ ಪಿ.ಜಿ ಮುಗಿದ ಮೇಲೆ ಪುಣೆಯಲ್ಲೇ ಪ್ರಾಕ್ಟೀಸು ಮಾಡುತ್ತಿದ್ದ.  ಉಷಾಳನ್ನು ಮದುವೆಯಾದ, ಮಗಳಾದಳು, ಪುಣೆಯಲ್ಲೇ ಮನೆ ಕಟ್ಟಿದ. 

ಇಷ್ಟೆಲ್ಲ ಕಾಲ ಕಳೆದಿದ್ದರೂ ಇನ್ನೂ ಮೊಬೈಲು ಅದೇ ತಾನೆ ಕಾಲಿಡುತ್ತಿದ್ದ, ಮನೆಯಲ್ಲಿ ಫೋನು ಇದ್ದರೆ ಶ್ರೀಮಂತರು ಎಂದು ಅಂದುಕೊಳ್ಳುವ ಕಾಲವದು. ಆದರೆ ಲ್ಯಾಂಡ್‍ಲೈನಿನಿಂದ ಎಸ್.ಟಿ.ಡಿ ಸುಲಭವಾಗಿತ್ತು ಅನ್ನುವಷ್ಟರ ಮಟ್ಟಿಗೆ ಸಂವಹನ ತಂತ್ರಜ್ಞಾನ ಮುಂದುವರೆದಿತ್ತು. ಆಸ್ಪತ್ರೆಯ ಕೆಲಸ ಮುಗಿಸಿ ರಾತ್ರಿ ತಡವಾಗಿ ಮನೆಗೆ ಬರುತ್ತಿದ್ದಂತೆಯೇ, ಹೆಂಡತಿ ಉಷಾ ಮಲ್ಲಿಕಾರ್ಜುನ ಫೋನ್ ಮಾಡಿರುವುದಾಗಿಯೂ ಯಾವ ವಿಷಯನ್ನು ಹೇಳದೇ ಸುಮ್ಮನೆ ಮಾಡಿದ್ದೇನೆಂದು ಹೇಳಿ ಫೋನು ಇಟ್ಟನೆಂದೂ ಹೇಳಿದಳು. ಮಲ್ಲಿಕಾರ್ಜುನ ಹಾಗೆಲ್ಲ ಸುಮ್ಮಸುಮ್ಮನೇ ಫೋನು ಮಾಡುವವನಲ್ಲವೇ ಅಲ್ಲ. ಕೂಡಲೇ ಮಲ್ಲಿಕಾರ್ಜುನನಿಗೆ ಫೋನಿಸಿದ. 

`ಜುಲೈ ೧೫ ನೇ ತಾರೀಖು ಮೈಸೂರಿನಲ್ಲಿ ನಮ್ಮ ಎಂಬಿಬಿಎಸ್ ಬ್ಯಾಚಿನ ಇಪ್ಪತ್ತನೇ ವರ್ಷದ ಪುನರ್ಮಿಲನವಿದೆ, ನಾನು ಹೋಗುತ್ತಿದ್ದೇನೆ ಸುಕುಟುಂಬ ಸಮೇತ, ನೀನೂ ಅಷ್ಟೇ, ತಪ್ಪಿಸಬೇಡ, ಫ್ಯಾಮಿಲಿ ಜೊತೆ ಬಾ`, ಎಂದು ಮಲ್ಲಿಕಾರ್ಜುನ. ಫೋನು ಇಡುತ್ತಿದ್ದಂತೆಯೇ ಅಮರನಿಗೆ ಪ್ರೇಮಾಳನ್ನು ನೋಡುವ ಆಸೆ ಮತ್ತೊಮ್ಮೆ ಮೂಡಿತು. ಅಮೇರಿಕದಲ್ಲಿರುವ ಪ್ರೇಮಾಳಿಗೆ ಈ ವಿಷಯ ಗೊತ್ತಿದೆಯೋ ಇಲ್ಲವೋ, ಗೊತ್ತಾದರೂ ಅವಳು ಬರುತ್ತಾಳೋ ಇಲ್ಲವೋ ಎಂದು ಪ್ರಶ್ನೆಗಳೆದ್ದವು. ಕೂಡಲೇ ಮತ್ತೆ ಮಲ್ಲಿಕಾರ್ಜುನನಿಗೆ ಫೋನು ಮಾಡಿ, ಯಾರು ಆರ್ಗನೈಸ್ ಮಾಡುತ್ತಿದ್ದಾರೆ, ಯಾವ ಹೊಟೇಲಿನಲಿ ಇಳಿದುಕೊಳ್ಳುವ ವ್ಯವಸ್ಥೆಯಾಗಿದೆ, ಎಷ್ಟು ದುಡ್ಡು, ಎಷ್ಟು ದಿನ, ಯಾರು ಯಾರು ಬರುತ್ತಿದ್ದಾರೆ ಎಂದೆಲ್ಲ ಕೇಳಿ ಒಂದಿಷ್ಟು ವಿಷಯ ತಿಳಿದುಕೊಂಡ. ಅಮೇರಿಕಕ್ಕೆ ವಲಸೆ ಹೋದ ಕೆಲವು ಗೆಳೆಯರು ಬರುತ್ತಾರೋ ಇಲ್ಲವೋ ತಿಳಿದುಕೊಂಡ. ಅಮೇರಿಕ ಮತ್ತು ಇಂಗ್ಲಂಡಿನಲ್ಲಿ ಇರುವವರಿಗೆ ರಜೆ ಇರುವ ಸಮಯ ನೋಡಿಯೇ ಜುಲೈನಲ್ಲಿ ಇಟ್ಟುಕೊಂಡಿರುವುದಾಗಿ ಮಲ್ಲಿಕಾರ್ಜುನ ಹೇಳಿದ. ನೇರವಾಗಿ ಪ್ರೇಮಾಳಿಗೆ ಈ ವಿಷಯ ಗೊತ್ತೋ ಇಲ್ಲವೋ ಕೇಳಲು ಹೋಗಲಿಲ್ಲ, ಏಕೆಂದರೆ ಮಲ್ಲಿಕಾರ್ಜುನನಿಗೂ ಕೂಡ ತನಗೆ ಆ ಕಾಲದಲ್ಲಿ ಪ್ರೇಮಾಳನ್ನು ಕಂಡರೆ ಇಷ್ಟ ಎಂಬ ಸಣ್ಣ ಸುಳಿವನ್ನೂ ಕೊಟ್ಟಿರಲಿಲ್ಲವಲ್ಲ. 

ಉಷಾ, `ಏನು ಸಮಾಚಾರ? ನಿನ್ನ ಫ್ರೆಂಡಿಗೆ ಫೋನು ಮಾಡಿ ತುಂಬ ಖುಷಿಯಲ್ಲಿ ಇದ್ದೀಯಾ?` ಎಂದು ಅಮರನನ್ನು ಕೇಳಿದಳು. 

ಅಮರ ಖುಷಿಖುಷಿಯಲ್ಲಿ ಮೈಸೂರಿನಲ್ಲಿ ನಡೆಯುವ `ಪುನರ್ಮಿಲನ`ದ ಬಗ್ಗೆ ಹೇಳಿದ. ಎಂದೂ ಜಾಸ್ತಿ ಮಾತಾಡದ ಅಮರ, ಊಟ ಮಾಡುತ್ತ, ಊಟವಾದ ಮೇಲೆ ತನ್ನ ಎಂ.ಬಿ.ಬಿ.ಎಸ್ ದಿನಗಳ ಬಗ್ಗೆ, ಗುರುಗಳ ಬಗ್ಗೆ, ಕಾಲೇಜಿನ ಬಗ್ಗೆ, ಮೈಸೂರಿನ ರಸ್ತೆ-ಗಲ್ಲಿಗಳ ಬಗ್ಗೆ, ಹೊಟೇಲುಗಳ ಬಗ್ಗೆ ಕಥೆಗಳನ್ನು ಹೇಳುತ್ತ ಹೋದ. ಮಲ್ಲಿಕಾರ್ಜುನ ಕುಟುಂಬ ಸಮೇತ ಬರುತ್ತಿರುವುದಾಗಿ ಹೇಳಿದ. ಉಷಾ ಇದನ್ನೆಲ್ಲ ಆಗಲೇ ನೂರಾರು ಸಲ ಕೇಳಿದ್ದಳು. ಆದರೂ ಈಗ ಹುಟ್ಟಿರುವ ಉತ್ಸಾಹಕ್ಕೆ ಏಕೆ ತಣ್ಣೀರೆರೆಯುವುದೆಂದು ಕೇಳಿಸಿಕೊಂಡಂತೆ ನಟಿಸಿದಳು. 

ಉಷಾ, `ನಾನೂ ಕೂಡ ಮೈಸೂರು ನೋಡಿ ಯಾವ ಕಾಲವಾಯಿತು? ಮಗಳು ಕೂಡ ಮೈಸೂರು ನೋಡಿಲ್ಲ,` ಎಂದಳು. 

ಅಮರ ಮಾರನೆಯ ದಿನವೇ ಪುಣೆಯಿಂದ ಬೆಂಗಳೂರಿಗೆ ಮೂವರಿಗೂ ರೈಲು ರಿಸರ್ವೇಶನ್ ಮಾಡಿದ.  

ಅಂದಿನಿಂದ ಅಮರನಿಗೆ ಪ್ರೇಮಳನ್ನು ನೋಡುವ ಆಸೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಯಿತು. ಇದುವರೆಗೂ ಒಂದೇ ಒಂದು ಸಲವೂ ಪ್ರೇಮದ ಸುಳಿವು ಬಿಟ್ಟುಕೊಡದ, ತುಟಿ ಸೋಕದ, ಮೈಮುಟ್ಟದ ಪ್ರೇಮಾಳನ್ನು ನೋಡುವ ಕಾತರ ಇಷ್ಟು ವರ್ಷವಾದ ಮೇಲೂ ಮತ್ತೆ ಚಿಗುರಿ ಪೆಡಂಭೂತದಂತೆ ಬೆಳೆಯುತ್ತಿರುವುದನ್ನು ನೋಡಿ ಅಮರನಿಗೆ ದಿಗಿಲಾಯಿತು, ಅದೇ ಸಮಯಕ್ಕೆ ತನ್ನ ವಯಸ್ಸು ಇಪ್ಪತ್ತು ವರ್ಷ ಹಿಂದೆ ಚಲಿಸುತ್ತಿರುವಂತೆ ಅನಿಸಿ ರೋಮಾಂಚನವೂ ಆಯಿತು.

(ಮುಂದುವರೆಯುವುದು…)