ದೀಪಾವಳಿ ಕವಿತೆ ಮತ್ತು ಅನಬೆಲ್ಲ ಹೇಳಿದ ಅಮರಾಂತೆ ಕಥೆ.

ಎಳ್ಳೆಣ್ಣೆಯ ಎರಡು ದೀಪ. 
            _ ಡಾ. ದಾಕ್ಷಾಯಿಣಿ ಗೌಡ 


ಈ ಬಾರಿ,ಹೊಸ ಪರಿಯ ಕಳಕಳಿ
ನಮ್ಮ ನಿಮ್ಮೆಲ್ಲರ ಈ ದೀಪಾವಳಿ

ನಮ್ಮೂರಲ್ಲಿ, ಗೃಹಜ್ಯೋತಿಯ ಆಗಮನ,
ಆದರೇನು, ಯೂನಿಟ್ನ ಮಿತಿಮೀರದೆಡೆ ಗಮನ
ಸಾಮಾನ್ಯರಿಗೆ ಎಣ್ಣೆ ಬಲು ದುಬಾರಿ,
ಸರ್ಕಾರದ ಖರ್ಚಿನಲ್ಲಿ ಕೋಟಿ ದೀಪಗಳ ಅದ್ದೂರಿ.
ಮನೆಮುಂದೆ ಮಿನುಗುತ್ತಿದೆ ಎಳ್ಳೆಣ್ಣೆಯ ಎರಡು ದೀಪ.

ಈ ಊರಲ್ಲೂ ಬಗ್ಗುತ್ತಿಲ್ಲ ಹಣದುಬ್ಬರ
ಕೈಗೆಟುಕದು ಬಡತನಕೆ ವಿದ್ಯುತ್ ದರ.
ಬಿಸಿ ಊಟ, ಬಿಸಿಗಾಳಿ ಆಶಿಸುವ ಎದೆ, ಉದರ,
ಎಚ್ಚರಿಕೆ, ಕೂಗುತಿದೆ, ಹಿಮಗಾಳಿಯ ಅಬ್ಬರ.
ಮನೆಮುಂದೆ ಮಿನುಗುತ್ತಿದೆ ಎಳ್ಳೆಣ್ಣೆಯ ಎರಡು ದೀಪ.

ಕಾಂಚಾಣ ಕುಣಿಸಿದಂತೆ ಆಡುವ, ತೂಗುವ ಬೆಳಕು,
ಗಗನ ಕುಸುಮ, ಬಡತನಕೆ, ಬಹುದೀಪಗಳ ಥಳುಕು.
ಲಕ್ಷದೀಪವಿರಲಿ, ಕಗ್ಗತ್ತಿನ ಕತ್ತಲಿರಲಿ ಹೊರಗೆ,
ಮಿನುಗಲಿ ನಿಮ್ಮ ನಮ್ಮೊಳಗೆ ಆನಂದದ ದೀಪ,
ಹೊಸಬಗೆಯ ಬೆಳಕಲಿ, ಬೆಳಗಲಿ ನಮ್ಮ ಸೃಷ್ಟಿಯ ದ್ವೀಪ.

ಅನಬೆಲ್ಲ ಹೇಳಿದ ಅಮರಾಂತೆ ಕಥೆ - ಡಾ.ಮುರಳಿ ಹತ್ವಾರ್ 
                     

ಅಮರಾಂತೆ ಪೋರ್ಚುಗಲ್ಲಿನ ಒಂದು ಸಣ್ಣ ಊರು. ಅದರ ಮಧ್ಯದಲ್ಲೊಂದು ನದಿ, ಅದರ ಹೆಸರು ತಮೆಗಾ. ಡ್ಯುರೋ ನದಿಯ ಉಪನದಿಯಾದ ಇದರ ಒಂದು ಕಡೆ ಈಗ ಹೊಟೇಲಾಗಿರುವ ಹಳೇ  ಕಾಲದ ಶ್ರೀಮಂತನ ಬಂಗಲೆ ಮತ್ತದರ ಸುತ್ತ ಬೆಳೆದ ಮನೆಗಳು, ಅಂಗಡಿಗಳು ಇತ್ಯಾದಿ. ಇನ್ನೊಂದು ಕಡೆ, ಸಂತ ಗೋನ್ಸಾಲನ ಇಗರ್ಜಿ ಮತ್ತದರ ಹಿಂದೆ ಯಾವತ್ತೋ ಇದ್ದ ಕಾಡನ್ನು ಮರೆಸಿ ಬೆಳೆದ ಊರು. ಮಧ್ಯದಲ್ಲೊಂದು ಅವೆರಡನ್ನೂ ಸೇರಿಸುವ ಹಳೆಯ ಬ್ರಿಡ್ಜ್ . ಸುಮಾರು  ೭೦೦ ವರ್ಷದ ಹಿಂದೆ ಇದ್ದ, ಮೊದಲು ಪಾದ್ರಿಯಾಗಿ, ಆಗಾಗ ಪವಾಡ ಮಾಡಿ, ದೊಡ್ಡ ಮೊನಾಸ್ಟರಿಯೊಂದನ್ನು ಕಟ್ಟಿ, ಕಡೆಗೆ ಸಂತರಾದ ಗೋನ್ಸಾಲರ ಇಗರ್ಜಿಯ ಅಮರಾಂತೆ ಈಗ ಪೊರ್ಟೊ ನಗರದಿಂದ ಡ್ಯುರೋ ಕಣಿವೆಗೆ ಮುಂಜಾನೆ ಹೊರಟು ಸಂಜೆಗೆ ಮರಳುವ ಪ್ಯಾಕೇಜ್ ಟೂರಿಗರಿಗೆ ಮೊದಲು ಸಿಗುವ ಸ್ಟಾಪ್. 

ಪೊರ್ಟೊ ದಲ್ಲಿ ಮುಂಜಾನೆ ಎಂಟಕ್ಕೆ ಟೂರಿನ ಮಿನಿ ಬಸ್ ಆಫೀಸಿಗೆ ವಿಧೇಯ ವಿದ್ಯಾರ್ಥಿಗಳಂತೆ ಅರ್ಧ ಗಂಟೆ ಮುಂಚೆಯೇ ತಲುಪಿದ್ದ ನಮಗೆ, ಅಲ್ಲಿನ ಏಜೇಂಟ್ ಒಬ್ಬ ನಮ್ಮ ಬಸ್ ನಂಬ್ರ ೧೯ ಮತ್ತು ಗೈಡ್ ಅನಬೆಲ್ಲ ಎಂದು ಪ್ರಿಂಟಾದ ಚೀಟಿ ಕೊಟ್ಟ. ಅದಾಗಿ ಸ್ವಲ್ಪ ಹೊತ್ತಿಗೆ ಆ ಬಸ್ಸು ಮತ್ತದರೊಟ್ಟಿಗೆ ಬಂದಿಳಿದ ಮಧ್ಯ ವಯಸ್ಸಿನ ಸ್ಥೂಲ ಕಾಯದ ಅನಬೆಲ್ಲ, ಗಟ್ಟಿ ದನಿಯಲ್ಲಿ ಬಸ್ಸಿನ ನಂಬ್ರ ಮತ್ತೆ ಹೊರಡುವ ಟೈಮನ್ನು ಮೊದಲು ಇಂಗ್ಲಿಷಿನಲ್ಲೂ ನಂತರ ಫ್ರೆಂಚಿನಲ್ಲೂ ಕೂಗಿ, ಆ ಕರೆಗೆ ಕಾದವರಂತೆ ಗಡಿಬಿಡಿಯಲ್ಲಿ ಅನಬೆಲ್ಲ ಸುತ್ತ ಸೇರಿದ ಜನರನ್ನ ಬಸ್ಸೇರಿಸಿ, ಕಡೆಗೆ ತಾನೂ ಹತ್ತಿ ಮುಂದಿನ ಸೀಟಿನಲ್ಲಿ ಕುಳಿತು,  ಕೈಗೊಂದು ವಯರಿನ ಮೈಕೆಳೆದುಕೊಂಡು ಮಾತು ಶುರುಮಾಡಿದಳು. 

ಅವಳ ಮಾತುಗಳು ರೆಕಾರ್ಡೆಡ್ ಟೇಪಿನಂತೆ ಇಂಗ್ಲಿಷ್-ಫ್ರೆಂಚ್ ತಾಳದಲ್ಲಿ ಬಸ್ಸಿನ ಕಿಟಕಿಯಾಚೆ ಕಾಣುವ ಐತಿಹಾಸಿಕ ಕಟ್ಟಡಗಳು, ಬ್ರಿಡ್ಜುಗಳು, ಸುರಂಗಳು ಅವನ್ನೆಲ್ಲ ಆದಷ್ಟು ಕಡಿಮೆ ಶಬ್ದಗಳಲ್ಲಿ ಹೇಳುತ್ತಾ, ಮಧ್ಯೆ ಮಧ್ಯೆ ನಗೆ ತಾರದ  ಜೋಕುಗಳನ್ನು ಉರುಳಿಸುತ್ತಾ, ಆದಷ್ಟು ಮೊಬೈಲ್ ಫೋನಿನಲ್ಲಿ ಅದ್ದಿದ ಮುಖಗಳನ್ನು ಹೊರ ತೆರೆಯಲು ಪ್ರಯತ್ನಿಸುತ್ತಿದ್ದಳು. ಕಡೆಗೊಮ್ಮೆ ಬಸ್ಸು ನಿಧಾನಿಸಿ ನಿಂತಾಗ, ಎಲ್ಲರನ್ನು ಕೆಳಗಿಳಿಸಿ, ಪಕ್ಕದ ಕಟ್ಟೆಯ ಮೇಲೆ ನಿಂತು, ಕೆಳಗೆ ಹರಿಯುತ್ತಿದ್ದ ತಮೆಗಾ ನದಿಯ ಪರಿಚಯವನ್ನೂ, ಗೋನ್ಸಾಲರ ಇಗರ್ಜಿಯನ್ನೂ ತೋರಿಸಿ, ಮುಕ್ಕಾಲು ಘಂಟೆಯೊಳಗೆ ಎಲ್ಲ ಸುತ್ತಿ, ಫೋಟೋದಲ್ಲಿ ಕಟ್ಟುವಷ್ಟು ಕಟ್ಟಿ, ಮತ್ತೆ ಬಸ್ಸಿನಲ್ಲಿರಬೇಕೆಂದು ಅಪ್ಪಣಿಸಿದಳು. ಅಷ್ಟಕ್ಕೇ ನಿಲ್ಲಿಸದೆ, ತನ್ನ ಮೊಬೈಲಿನಲ್ಲಿದ್ದ ಫೋಟೋವೊಂದನ್ನು ಗುಂಪಿನ ಎಲ್ಲ ಅಡಲ್ಟಿಗರಿಗೆ ತೋರಿಸುತ್ತ, ಅವರ ನಾಚಿಕೆಯ, ಆಶರ್ಯದ ನಗುವಿಗೆ ತಾನು ನಗುತ್ತ, ಅದೊಂದು ಜೋಕು ಎಂದಳು. ಅವಳು ತೋರಿಸಿದ ಆ ಫೋಟೋದ ಮರ್ಮ ಮತ್ತು ಅದರ ಹಿಂದಿನ ಜೋಕು ಆಗ ಅರ್ಥವಾಗಿರಲಿಲ್ಲ. ಸುಮ್ಮನೆ ನಕ್ಕೆವು. 

ಅನಬೆಲ್ಲ ಹೇಳಿದಂತೆ, ಆ ಹಳೆಯ ಬ್ರಿಡ್ಜಿನತ್ತ ನಡೆದು, ಅದರ ಮೇಲೆ ನಿಂತು ಆಚೆ ಈಚೆಯ ಕಟ್ಟಡಗಳನ್ನು, ಕೆಳಗೆ ಹರಿಯುತ್ತಿರುವ ನದಿಯ ಹರಿವನ್ನೂ ನೋಡುತ್ತಾ, ಗೊನ್ಸಾಲರು ತಮ್ಮ ಪವಾಡದಲ್ಲಿ ಮೊದಲು ಕಟ್ಟಿದ, ಆನಂತರ  ೧೭-೧೮ ಶತಮಾನದಲ್ಲಿ ಮತ್ತೆ ಹೊಸದಾಗಿ ಕಟ್ಟಿದ, ನೆಪೋಲಿಯನ್ನಿನ ಕಾಲದಲ್ಲಿ ನಡೆದ ಹೋರಾಟದಲ್ಲಿ ಸಿಡಿದ ಗುಂಡುಗಳ ಕಲೆಯನ್ನ ಇನ್ನೂ ಸಾಕಿರುವ ಆ ಬ್ರಿಡ್ಜನ್ನು ದಾಟಿ, ಅಮರಾಂತೆಯ ಸಂತರ ಇಗರ್ಜಿಯತ್ತ ನಡೆದ ನಮಗೆ, ಮೊದಲು ಕರೆದದ್ದು ಅಲ್ಲಿನ ಕಾರ್ ಪಾರ್ಕಿನ ಪಕ್ಕದ ಸಣ್ಣ ತೋಟದಲ್ಲಿ ದೊಡ್ಡದಾಗಿ ಇಂಗ್ಲಿಷ್ ಅಕ್ಷರಗಳಲ್ಲಿ ನಿಲ್ಲಿಸಿಟ್ಟ AMARANTE. ಬಣ್ಣ ಬಣ್ಣದ ಆ ದೊಡ್ಡ ಅಕ್ಷರಗಳ ಮುಂದೆ ನಿಂತು ಫೋಟೋದಲ್ಲಿ ನಮ್ಮ ಜೊತೆ ಅದನ್ನು ಸೇರಿಸಿ ಹೊರನಡೆಯುವಾಗ, ಪಕ್ಕದಲ್ಲೇ ಚಪ್ಪರವೊಂದರ ಕೆಳಗೆ ಒಂದಿಷ್ಟು ಸಾಮಾನುಗಳನ್ನು ಮಾರುತ್ತಿದ್ದ, ಆ ಕಾರ್ ಪಾರ್ಕಿನ ಒಂದೇ ಅಂಗಡಿಯತ್ತ, ಅಲ್ಲಿನ 'ವಿಶಿಷ್ಣ' ಆಕಾರದ, ಪ್ಲಾಸ್ಟಿಕಿನಲ್ಲಿ ಸುತ್ತಿಟ್ಟ ವಸ್ತುಗಳನ್ನ ಏನೆಂಬ ಕುತೂಹಲದಲ್ಲಿ ನೋಡಲು ಹತ್ತಿರ ಹೋದೆವು. ಅಲ್ಲಿದ್ದದ್ದು, ಅನಬೆಲ್ಲ ಫೋನಿನಲ್ಲಿ ಜೋಕೆಂದು ತೋರಿಸಿದ ಆಕಾರದ ಸಣ್ಣ, ದೊಡ್ಡ, ಗಟ್ಟಿ, ಮತ್ತು ಮೆತ್ತನೆಯ ವೆರೈಟಿಯ ಕೇಕುಗಳು. 

ಆ ಕೇಕುಗಳ ದರ್ಶನದಿಂದ ಮನಸ್ಸಿನಲ್ಲಿ ಕುಣಿಯುತ್ತ ಮುಖದಲ್ಲಿ ಹೊರಬರಲು ಯತ್ನಿಸುತ್ತಿದ್ದ ಚೇಷ್ಟೆಯ ಹುಡುಗುತನವನ್ನ ಸ್ವಲ್ಪ ಬದಿಗಿಟ್ಟು, ಆ ಅಂಗಡಿಯ ಒಡತಿಗೆ, ಆ ಕೇಕುಗಳ ಆಕಾರದ ಹಿಂದಿನ ಕಥೆ ಏನೆಂದು ಕೇಳಿದೆವು. ನಮ್ಮ ಇಂಗ್ಲೀಷು ಆಕೆಯ ಪೋರ್ಚುಗೀಸು ನಡುವೆ ಯಾವುದೇ ಸೇತುವೆ ಇಲ್ಲದ ಕಾರಣ, ಕೈ ಸನ್ನೆಯಲ್ಲಿ ಒಂದು ಕೇಕಿನ ದುಡ್ಡು ಕೇಳಿ, ಕೊಂಡು, ಸಕ್ಕರೆಯ ಐಸಿಂಗಿನ ಆ ಕೇಕಿನ ಪ್ಲಾಸ್ಟಿಕಿನ ಬಂಧನದಿಂದ ಹೊರ ತಂದು, ತರತರದಲ್ಲಿ ಕೈಯಲ್ಲಿ ಹಿಡಿದು, ಫೋಟೋ ಮತ್ತು ವಿಡಿಯೋಗಳಲ್ಲಿ ಅದನ್ನು ವರ್ಣಿಸಿ, ಆಪ್ತ ಗೆಳೆಯರ ವಾಟ್ಸಪ್ಪ್ ಗುಂಪಿಗೆ ಆ  ಕೇಕನ್ನು ವಿಡಿಯೋದ ಮೂಲಕ ಅರ್ಪಿಸಿ, ಮುನ್ನಡೆದೆವು. ಆಗ ಮಾತೆಲ್ಲ ಆ ಕೇಕು ಹುಟ್ಟಿದ, ಮತ್ತೆ ಹೀಗೆ ದಿನ ದಿನ ಅಮರಾಂತೆಯ ಹಲವು ಓವನ್ನು ಗಳಲ್ಲಿ ಬೇಯುತ್ತಿರುವ ಅದರ ಅವತಾರಗಳ ಹಿಂದಿನ ಕಾರಣಕ್ಕೆ ನಮ್ಮ ಊಹೆಯ ಪಟ್ಟಿ. 

ಹಾಗೆ ಪಕ್ಕದ ಇಗರ್ಜಿಯ ಮುಂದಿಷ್ಟು ಭಂಗಿಗಳಲ್ಲಿ ನಮ್ಮನ್ನು ಫ್ರೇಮಿಸಿಕೊಂಡು, ಬ್ರಿಡ್ಜಿನ ಮೊದಲ ಬದಿಗೆ ಮರಳಿ, ಪಕ್ಕದ ಬೀದಿಯಲ್ಲಿ ಕಾಪಿಯ ಬಾಯಾರಿಕೆಗೆ ಹೊರಟ ನಮಗೆ ಮತ್ತೆ ಅಲ್ಲಿನ ಟೂರಿಸ್ಟ್ ಅಂಗಡಿಗಳ ಮ್ಯಾಗ್ನೆಟ್ಟುಗಳಲ್ಲಿ, ಹಾಗೆಯೇ ಆ ಬೀದಿಯ ಕೆಲವು ಬೇಕರಿಗಳಲ್ಲಿ ಮತ್ತದೇ ಕೇಕಿನ ದರ್ಶನ. ಬೇಕರಿಯ ಕೇಕುಗಳಿಗೆ ಸಕ್ಕರೆಯ ಕವಚವಿದ್ದರೆ, ಮ್ಯಾಗ್ನೆಟಿನ ಚಿತ್ರಗಳ ಕೇಕಿನ ಮೇಲೆ ಒಂದು ಹಲ್ಲಿ. ಆ ಮ್ಯಾಗ್ನೆಟ್ಟನ್ನು ಕೊಂಡುಕೊಳ್ಳುವಷ್ಟು ಧೈರ್ಯ ಬರಲಿಲ್ಲ. ಯಾವತ್ತಿನಂತೆ ಮೊಬೈಲಿನ ಕ್ಯಾಮರಾಕ್ಕೆ ಸೇರಿಸಿಕೊಂಡೆವಷ್ಟೇ. ಅಷ್ಟರಲ್ಲಿ ಸಮಯದ ಮುಳ್ಳು ಅನಬೆಲ್ಲ ಹಾಕಿದ ಗೆರೆ ಮುಟ್ತುತ್ತಿದ್ದರಿಂದ, ಅವಸರದಲ್ಲಿ ಕಾಪಿ ಕಪ್ಪು ಹಿಡಿದು ಬಸ್ಸಿನತ್ತ ಓಡಿದಂತೆ ನಡೆದೆವು. 

ಬಸ್ಸಿನ ಬಾಗಿಲಿನ ಪಕ್ಕ ನಿಂತಿದ್ದ ಅನಬೆಲ್ಲಳ ಹತ್ತಿರ ಅಮರಾಂತೆಯ ಕೇಕಿನ ಕಥೆ ಮತ್ತೆ ಕೇಳಲು, ಅವಳು ಅದರ ಹೆಸರು ಸಂತ ಗೊನ್ಸಾಲಿನ್ಹೋ ಎಂದೂ, ಹಾಗೆಂದರೆ 'ದಿ ಲಿಟಲ್ ಗೋನ್ಸಾಲ್' ಎಂದರ್ಥವೆಂದೂ, ಮತ್ತೆ ಒಂದು ಕಾಲದಲ್ಲಿ ಅತಿ ಪ್ರಬಲವಾಗಿದ್ದ ಚರ್ಚಿನ ಹಿಡಿತದ ವಿರುದ್ಧ ಯಾವಾಗಲೋ ಸಿಡಿದೆದ್ದ ರೆಬೆಲಿಗರು, ಅವರ ಕೋಪ ಮತ್ತೆ ವ್ಯಂಗ್ಯವನ್ನು ವ್ಯಕ್ತಪಡಿಸಲು ಮೊದಮೊದಲು ಈ ಕೇಕನ್ನು ಬೇಯಿಸಿದರೆಂದೂ, ಹಾಗೆ ಬರುಬರುತ್ತ ಅದು ಅಮರಾಂತೆಯ ಜೋಕಿನ  ಕೇಕಾಗಿ ಬಿಟ್ಟಿದೆ ಎಂದೆಲ್ಲ ವಿವರಿಸಿದಳು. ಅಷ್ಟಕ್ಕೇ ನಿಲ್ಲದೆ, ಆ ಕೇಕನ್ನು ತಿಂದವರಿಗೆ ಅವರಿಷ್ಟದ 'ಲವ್' ಸಿಗುತ್ತದೆ ಎಂದು ಜೋರಾದ ನಗುವಿನಲ್ಲಿ ಹೇಳುತ್ತಾ ಬಸ್ಸು ಹೊರಡಿಸಿದಳು. 

ಅವಳ ವಿವರಣೆ, ಸಮಾಜದ ಪ್ರಬುದ್ಧತೆಗೆ ಅನುಗುಣವಾಗಿ ಹೋರಾಟದ ಮಜಲುಗಳು ವ್ಯಕ್ತವಾಗುವ ರೀತಿ, ಅವುಗಳ ಹಿಂದಿನ ಪ್ರೇರಣೆ ಮತ್ತು ಧೈರ್ಯವನ್ನು ಮೆಚ್ಚುತ್ತ, ವಿಮರ್ಶಿಸುತ್ತಾ, ನೆನಪಿನ ಕೊಟ್ಟೆಯಲ್ಲಿ ಬೇರೆ ಬೇರೆ ರೀತಿಯಲ್ಲಿ ಅಮರಾಂತೆಯನ್ನ ಮಡಿಚಿಡುತ್ತಿದ್ದವು. ಅಮರಾಂತೆಯನ್ನು ದಾಟಿದ ಮೇಲೂ ತಣಿಯದ ಕುತೂಹಲದಲ್ಲಿ ಹುಡುಕಿದ ವಿಕಿಪಿಡಿಯಾದಲ್ಲೂ ಅನಬೆಲ್ಲ ಕಥೆಯಷ್ಟು ವಿವರಗಳಿರಲಿಲ್ಲ. ಆದರೆ, 'ಸಂತ ಗೊನ್ಸಾಲಿನ್ಹೋ'  ಚಿತ್ರವಿದೆ ಅಲ್ಲಿ, ಬೇಕಾದರೆ, ಸಣ್ಣ ಮಕ್ಕಳು ಪಕ್ಕ ಇಲ್ಲದಿದ್ದಾಗ ಸೈಲೆಂಟಾಗಿ ನೋಡಿ ನಮಸ್ಕರಿಸಿಬಿಡಿ.  

ಡಾ.ಉಮಾ ವೆಂಕಟೇಶ್ ಬರೆದ ಲೇಖನ, “ಐತಿಹಾಸಿಕ ವೈಭವ ನಗರಗಳು: ವಿಜಯನಗರ ರಾಜಧಾನಿ ಹಂಪೆ ಭಾಗ ೧ – ದರೋಜಿ ಕರಡಿಧಾಮ”

ಹಂಪೆ ಎಂದರೆ ಹಲವರಿಗೆ ಹಲವು ಭಾವ. ಇತಿಹಾಸವೋ, ಕೃಷ್ಣದೇವರಾಯನೋ, ನೆತ್ತಿ ಸುಡುವ ಬಳ್ಳಾರಿಯ ಬಿಸಿಲೋ, ಹಂಪೆ ಕನ್ನಡ ವಿಶ್ವವಿದ್ಯಾನಿಲಯವೋ, ಹೀಗೇ ಏನೆಲ್ಲಾ ಹೊಳೆಯುತ್ತದೆ. ಅಲ್ಲಿನ ಮಂಟಪಗಳು ಹೇಳುವ ಕಥೆಗಳು, ಶಿಲ್ಪ ಕಲೆ ಉಸುರುವ ಪಿಸುಮಾತುಗಳು, ಕಲ್ಲುಗಳು ಹಾಡುವ ಆಲಾಪನೆ, ಕೀರ್ತನೆಗಳು… ಅಲ್ಲಿರುವ ವಾನರಗಳು, ಕರಡಿಗಳು, ಇತರೆ ಮೃಗ ಪಕ್ಷಿಗಳು, ಪ್ರಕೃತಿ ಸೌಂದರ್ಯ ಕೂಡ ಅಷ್ಟೇ ಇಷ್ಟವಾಗುತ್ತವೆ. ಇತ್ತೀಚೆಗೆ ಅವನ್ನೆಲ್ಲಾ ನೋಡಿ, ಆನಂದಿಸಿ ಬಂದ ಡಾ. ಉಮಾ ವೆಂಕಟೇಶ್ ತಮ್ಮ ಅನುಭವ, ಪ್ರವಾಸೀ ಕಥನವನ್ನು ನಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದಾರೆ. ಕಥನದ ಮೊದಲ ಭಾಗ ಇಗೋ ನಿಮ್ಮ ಮುಂದೆ! -ಸಂ.

ಐತಿಹಾಸಿಕ ವೈಭವ ನಗರಗಳು: ವಿಜಯನಗರ ರಾಜಧಾನಿ ಹಂಪೆ

ಭಾಗ ದರೋಜಿ ಕರಡಿಧಾಮ

ಡಾ. ಉಮಾ ವೆಂಕಟೇಶ್

dsc_0180
ಕರಡಿಧಾಮ

“ವಿಜಯನಗರವನ್ನು ಕೃಷ್ಣದೇವರಾಯನು ಆಳುತ್ತಿದ್ದ ಕಾಲದಲ್ಲಿ, ಅಲ್ಲಿಯ ವೈಭವ ಎಷ್ಟಿತ್ತೆಂದರೆ, ಅಲ್ಲಿನ ರಸ್ತೆಯ ಬದಿಯಲ್ಲಿ ಮುತ್ತು, ರತ್ನ, ಹವಳ ಮತ್ತು ವಜ್ರ-ವೈಢೂರ್ಯಗಳನ್ನು ಬಳ್ಳದಲ್ಲಿ ಅಳೆದು ಮಾರುತ್ತಿದ್ದರು” ಎನ್ನುವ ಸಾಲುಗಳನ್ನು ನನ್ನ ಮಾಧ್ಯಮಿಕ ಶಾಲೆಯ ಚರಿತ್ರೆ ಮತ್ತು ಕನ್ನಡ ಪಠ್ಯಪುಸ್ತಕಗಳಲ್ಲಿ ಜೋರಾಗಿ ಓದಿ ಮನದಟ್ಟು ಮಾಡುಕೊಳ್ಳುತ್ತಿದ್ದ ದಿನಗಳು ಇನ್ನೂ ನನ್ನ ಮನದಲ್ಲಿ ಅಚ್ಚೊತ್ತಿದಂತಿದೆ. ೧೯೬೯ನೆಯ ಇಸವಿಯಲ್ಲಿ, ನನ್ನ ತಂದೆ ಬಳ್ಳಾರಿಯಲ್ಲಿ ಸುಮಾರು ಮೂರು ವರ್ಷಗಳ ಕಾಲ ಭೂಗರ್ಭಶಾಸ್ತ್ರಜ್ಞರಾಗಿ ಅಲ್ಲಿನ ಮ್ಯಾಂಗನೀಸ್ ಗಣಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ದಿನಗಳವು. ನನ್ನ ಚಿಕ್ಕಪ್ಪ ಮತ್ತು ಅವರ ಗೆಳೆಯ ನಮ್ಮ ಮನೆಗೆ ಬಳ್ಳಾರಿಗೆ ಬಂದಿದ್ದಾಗ, ನಾವೆಲ್ಲಾ ಹಂಪೆ ಮತ್ತು ಹೊಸಪೇಟೆಯ ತುಂಗಭದ್ರಾ ಅಣೆಕಟ್ಟನ್ನು ನೋಡಿ ಬಂದಿದ್ದೆವು. ಆಗ ನಾನಿನ್ನೂ ೭ ವರ್ಷದವಳು. ಅಲ್ಲಿಗೆ ಹೋಗಿದ್ದ ನೆನಪು ಮಸುಕುಮಸುಕಾಗಿದ್ದರೂ, ಹಂಪೆಯ ವಿರೂಪಾಕ್ಷ ದೇವಾಲಯ, ಸಾಸಿವೆ ಮತ್ತು ಕಡಲೆ ಕಾಳು ಗಣಪತಿ, ಉಗ್ರನರಸಿಂಹ, ಕಲ್ಲಿನ ರಥದ ಚಿತ್ರಗಳು ಹಸಿರಾಗಿದ್ದವೆನ್ನಬಹುದು. ಜೊತೆಗೆ ೭೦ರ ದಶಕದಲ್ಲಿ ನೋಡಿದ್ದ ಪ್ರಸಿದ್ಧ ಕನ್ನಡ ಚಲನಚಿತ್ರ “ಕೃಷ್ಣದೇವರಾಯ”ದ ಹಲವಾರು ದೃಶ್ಯಗಳು ಮತ್ತು ಹಾಡುಗಳನ್ನು ಇನ್ನೂ ಮರೆತಿಲ್ಲ. ಹಾಗಾಗಿ ನಮ್ಮ ಮಕ್ಕಳೂ ಕೂಡಾ ಕರ್ನಾಟಕದ ಗತವೈಭವಗಳನ್ನು ಹೊತ್ತ, ನಮ್ಮ ಚರಿತ್ರೆಯನ್ನು ಹೇಳುವ ಹಂಪೆಯನ್ನು ಒಮ್ಮೆ ನೋಡಲೆಂದು ಬಹಳ ಆಸೆ ಇತ್ತು. ಈ ಬಾರಿ ಬೆಂಗಳೂರಿಗೆ ಹೋದಾಗ, ಹೊರಗೆ ಕರೆದುಕೊಂಡು ಹೋಗದಿದ್ದರೆ ನಾವು ಬರುವುದಿಲ್ಲ ಎಂದು ಮಕ್ಕಳು ಪಟ್ಟು ಹಿಡಿದದ್ದು ಒಳ್ಳೆಯದೇ ಆಯಿತು. ಸರಿ ನಾನು ಕಾರ್ಡಿಫ಼್ ನಗರದಲ್ಲಿ ನಮ್ಮ ಮನೆಯಲ್ಲೇ ಕುಳಿತು, ಗೂಗಲ್ ಕೃಪೆ ಮತ್ತು ನೆರವಿನಿಂದ ಅಲ್ಲಿನ ಎಲ್ಲಾ ವಿಷಯಗಳನ್ನು ಸಂಗ್ರಹಿಸಿ ಹೋಟೆಲ್ ಮತ್ತು ಪ್ರಯಾಣಗಳನ್ನು ೬ ತಿಂಗಳು ಮುಂಚಿತವಾಗಿ ಬುಕ್ ಮಾಡಿಬಿಟ್ಟೆ.

ಜುಲೈ ತಿಂಗಳ ೨೪ರ ರಾತ್ರಿ ೧೦ ಗಂಟೆಗೆ ಬೆಂಗಳೂರಿನ ಕಂಟೋನ್ಮೆಂಟ್ ಅಥವಾ ದಂಡು ನಿಲ್ದಾಣದಿಂದ ಹೊರಟ ಹಂಪೆ ಎಕ್ಸಪ್ರೆಸ್ ರೈಲಿನಲ್ಲಿ ಸಂಸಾರ ಸಮೇತ ಹೊಸಪೇಟೆಯತ್ತ ಪ್ರಯಾಣ ಬೆಳೆಸಿದೆವು. ರಾತ್ರಿ ಕಳೆದು ಬೆಳಗಿನ ೮ ಗಂಟೆಯ ಸಮಯಕ್ಕೆ ಹೊಸಪೇಟೆ ತಲುಪಿದ ನಾವು ಈ ಮೊದಲೆ ನಾನು ಬುಕ್ ಮಾಡಿದ್ದ ಅಲ್ಲಿನ ಉತ್ತಮ ದರ್ಜೆಯ ಹೋಟೆಲ್ ಎನಿಸಿದ “ಮಲ್ಲಿಗೆ”ಯತ್ತ ಆಟೋಗಳಲ್ಲಿ ನಡೆದೆವು. ೬೯ರ ಇಸವಿಯಲ್ಲಿ ಹೊಸಪೇಟೆ ಇದ್ದ ರೀತಿ ಮತ್ತು ಸ್ಥಿತಿ ನನಗೆ ಅಷ್ಟಾಗಿ ನೆನಪಿಲ್ಲ. ಹಾಗಾಗಿ ಈ ಬಾರಿ ನೋಡಿದ್ದೆ ಗೊತ್ತು. ನಗರದ ಪರಿಸ್ಥಿತಿ, ಶುಚಿತ್ವವೇನೂ ಅಷ್ಟು ಸರಿಯಿಲ್ಲ. ಕರ್ನಾಟಕದಲ್ಲಿ ಹುಟ್ಟಿ, ಬೆಳೆದು, ವಿದ್ಯಾಭ್ಯಾಸ ಮಾಡಿದ ನನಗೆ, ನನ್ನ ಪತಿಗೆ ಇದೇನೂ ಹೊಸದಲ್ಲ. ನಮ್ಮ ಮಕ್ಕಳಿಗೆ ಸ್ವಲ್ಪ ಗಾಬರಿಯಾಯಿತು. ಆದರೆ ಒಮ್ಮೆ ಮಲ್ಲಿಗೆ ಹೋಟೆಲ್ ಬಳಿ ತಲುಪಿದಾಗ ಸ್ವಲ್ಪ ಆಶ್ಚರ್ಯವೇ ಆಯಿತು. ಹೋಟೆಲ್ ಆಸು-ಪಾಸು ಮತ್ತು ಆವರಣಗಳು ಬಹಳ ಚೆನ್ನಾಗಿದೆ. ಹೋಟೆಲಿನ ಹಲವಾರು ಭಾಗಗಳನ್ನು ಹೊಸದಾಗಿ ಕಟ್ಟಿ ಬಹಳ ಓರಣವಾಗಿ ಇಟ್ಟಿದ್ದಾರೆ. ನೋಡಿ ನಮಗೆಲ್ಲಾ ಸಮಾಧಾನವಾಯಿತು. ನಮ್ಮ ಕೋಣೆಗಳೂ ಕೂಡಾ ಅಚ್ಚುಕಟ್ಟಾಗಿದ್ದು, ಪಾಶ್ಚಿಮಾತ್ಯ ಹೋಟೆಲಿನಲ್ಲಿರುವಂತೆ ಎಲ್ಲಾ ಸೌಲಭ್ಯಗಳೂ ಇವೆ. ಹೋಟೆಲಿನ ರೆಸ್ಟೋರೆಂಟಿನಲ್ಲಿ ಉತ್ತಮ ಗುಣಮಟ್ಟದ ಊಟ-ತಿಂಡಿಗಳೂ ಲಭ್ಯವಿದ್ದು, ನಮ್ಮ ಮಕ್ಕಳು ಬಹಳ ಖುಷಿಯಾಗಿ ಎಲ್ಲವನ್ನೂ ತಿಂದು ತೃಪ್ತಿಪಟ್ಟರು ಎನ್ನಬಹುದು. ರಾತ್ರಿಯ ಪ್ರಯಾಣದ ಆಯಾಸವನ್ನು ಒಂದು ಸಣ್ಣ ನಿದ್ದೆ ತೆಗೆದು ಪರಿಹರಿಸಿಕೊಂಡನಂತರ, ಪುಷ್ಕಳವಾದ ಮದ್ಯಾನ್ಹದ ಭೋಜನವನ್ನು ಪೂರೈಸಿದ ನಾವು, ಹೋಟೆಲಿನ ಸ್ವಾಗತ ಡೆಸ್ಕಿನಲ್ಲಿದ್ದ ಅವರದೇ ಪ್ರವಾಸ ವಿಭಾಗದಲ್ಲಿ ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳನ್ನು ನೋಡುವ ವ್ಯವಸ್ಥೆಯ ಬಗ್ಗೆ ವಿಚಾರಿಸಿದೆವು.

ಅದೃಷ್ಟವಶಾತ್ ಮಲ್ಲಿಗೆ ಹೋಟೆಲಿನೊಂದಿಗೆ ಸಹಭಾಗಿತ್ವದಲ್ಲಿ ಆ ಏರ್ಪಾಡೂ ಇದೆ ಎಂದು ತಿಳಿದ ನಾವು, ಆ ಮಧ್ಯಾನ್ಹ ಅಲ್ಲಿಯೇ ಹತ್ತಿರದಲ್ಲಿರುವ ದರೋಜಿ ಕರಡಿ ಧಾಮ ಮತ್ತು ತುಂಗಭಧ್ರಾ ಅಣೆಕಟ್ಟುಗಳನ್ನು ನೋಡಲು ನಿರ್ಧರಿಸಿದೆವು. ಉತ್ತಮ ಮಟ್ಟದ ಟೊಯೋಟಾ ಕ್ವಾಲಿಸ್ ಕಾರಿನಲ್ಲಿ ಕುಳಿತು ಹಂಪೆಯ ಪ್ರವಾಸವನ್ನು ಆರಂಭಿಸಿದ ನಮಗೆ, ಹೊಸಪೇಟೆಯಿಂದ ಹೊರಬಿದ್ದ ತಕ್ಷಣವೇ, ಸುತ್ತಲೂ ಹಸಿರಿನ ದರ್ಶನವಾಗಿ ನೆಮ್ಮದಿಯೆನಿಸಿತು.

dsc_0159
ತೆಂಗು, ಸೂರ್ಯಕಾಂತಿ ಬೆಳೆ

ತೆಂಗು, ಕಬ್ಬು, ಬಾಳೆ ಮತ್ತು ಸೂರ್ಯಕಾಂತಿ ಬೆಳೆಗಳಿಂದ ಮೈದುಂಬಿದ ಹೊಲ-ತೋಟಗಳು, ಬಣ್ಣಬಣ್ಣದ ಹಕ್ಕಿಗಳ ಚಿಲಿಪಿಲಿಗುಟ್ಟುವಿಕೆಯಿಂದ ತುಂಬಿದ ಹಸಿರಿನ ರಾಶಿ, ನೀಲಿ ಆಗಸಗಳು ನಮ್ಮ ಕ್ಯಾಮೆರಾದಲ್ಲಿ ಸೆರೆಯಾಗತೊಡಗಿದವು.

dsc_0138
ಬಾಳೆ ಮೈದುಂಬಿದ ಹೊಲ-ತೋಟಗಳು

ಕಿಂಗ್-ಫ಼ಿಷರ್ (ಮೀಂಚುಳ್ಳಿ), ಬಾನಾಡಿಗಳು, ಬಿಳಿಕೊಕ್ಕರೆ, ನೀಲಿ ಮತ್ತು ಕಂದು ಹೆರಾನ್, ಪಚ್ಚೆವರ್ಣದ ಗಿಳಿಸಂಕುಲ ಹೀಗೆ ಹಲವು ಹತ್ತು ಬಗೆಯ ಪಕ್ಷಿಗಳು ನಮ್ಮ  ಮನವನ್ನು ತಣಿಸಿದೆವು. ತುಂಗಭದ್ರ ನಾಲೆಯ ಅಕ್ಕಪಕ್ಕದಲ್ಲಿ ಹಳ್ಳಿಯ ಜನ ಪಾತ್ರೆ-ಬಟ್ಟೆಗಳನ್ನು ಸ್ವಚ್ಛಗೊಳಿಸುತ್ತಿದ್ದನ್ನು ಕಂಡ ನನ್ನ ಮಕ್ಕಳಿಗೆ ತಾವೊಂದು ಬೇರೆಯ ಯುಗದಲ್ಲಿರುವಂತೆ ಭಾಸವಾಯಿತು. ಚಿಕ್ಕಂದಿನಿಂದ ಈ ಚಟುವಟಿಕೆಗಳನ್ನು ನೋಡಿ, ಮಾಡುತ್ತಾ ಬೆಳೆದ ನಮಗೆ ಇದು ಸಾಮಾನ್ಯ ದೃಶ್ಯ! ನಮ್ಮ ಕಾರಿನ ಡ್ರೈವರ್ ನಮ್ಮೊಡನೆ ಕನ್ನಡದಲ್ಲಿ ನಿರಾಳವಾಗಿ ಹರಟುತ್ತಾ ನಮಗೆ ಅಲ್ಲಿನ ಆಗುಹೋಗುಗಳ ಸಂಪೂರ್ಣ ಮಾಹಿತಿಯನ್ನು ಎಡೆಬಿಡದೆ ನೀಡುತ್ತಿದ್ದ. ಸುಮಾರು ೪೦ ನಿಮಿಷಗಳ ಪ್ರಯಾಣದ ನಂತರ, ಒಮ್ಮೆಗೆ ಕಲ್ಲು, ಬೆಟ್ಟಗುಡ್ಡಗಳಿಂದ ಆವೃತವಾದ, ನಿರ್ಜನವಾದ ಕರಡಿಧಾಮದೊಳಕ್ಕೆ ಆಗಮಿಸಿದೆವು. ರಾಜ್ಯ ಅರಣ್ಯ ಇಲಾಖೆಯ ಪ್ರವೇಶದ್ವಾರದಲ್ಲಿ ಸಹಿ ಮಾಡಿ, ಪ್ರವೇಶ-ದರದ ಹಣವನ್ನು ಪಾವತಿ ಮಾಡಿದ ನಂತರ ನಮ್ಮನ್ನು ಒಳಬಿಟ್ಟರು. ಇಲ್ಲಿ ಕಾಲುನಡಿಗೆಯಲ್ಲಿ ಹೋಗಲು ಅನುಮತಿಯಿಲ್ಲ. ಕಾಡುಪ್ರಾಣಿಗಳಿಗೆ ಮಾತ್ರಾ ಮೀಸಲಾದ ಪ್ರದೇಶ. ಹಾಗಾಗಿ ವಾಹನಗಳಲ್ಲಿ ಅಲ್ಲಿಯ ಉನ್ನತ ಪ್ರದೇಶವೊಂದರಲ್ಲಿ ಕಟ್ಟಿದ ವೀಕ್ಷಣ-ಗೋಪುರದವರೆಗೂ ಹೋಗಿ, ಅಲ್ಲಿ ನಿಂತು ಕರಡಿಗಳನ್ನು ದೂರದಿಂದ ನೋಡುವ ವ್ಯವಸ್ಥೆ ಮಾಡಿದ್ದಾರೆ.

ಪ್ರತಿದಿನ ಮದ್ಯಾನ್ಹ ೩-೫ ಗಂಟೆಗಳ ಸಮಯದಲ್ಲಿ, ಇಲ್ಲಿ ಅರಣ್ಯ ಇಲಾಖೆಯವರು ಇಡುವ ಬಾಳೆ, ಬೆಲ್ಲ, ಮೆಕ್ಕೆಜೋಳದ ಊಟವನ್ನು ಸವಿಯಲು ಬರುತ್ತವೆ. ಈ ಪ್ರಾಣಿಗಳು ಅದೃಷ್ಟವಿದ್ದರೆ ಕಾಣಸಿಗುತ್ತವೆ ಎಂದೂ ನಮ್ಮ ಡ್ರೈವರ್ ನಮ್ಮನ್ನು ಎಚ್ಚರಿಸಿದ್ದ. ಸರಿ ವಾಚ್-ಟವರಿನ ಮೇಲ್ಭಾಗದಲ್ಲಿ ನಿಂತು, ನಮ್ಮ ಕ್ಯಾಮೆರಾ ಮತ್ತು ದುರ್ಬೀನನ್ನು ಹಿಡಿದು ಕರಡಿ ದರ್ಶನಕ್ಕೆ ಕಾದು ನಿಂತೆವು. ಈ ಮಧ್ಯದಲ್ಲಿ ನಮ್ಮ ಸುತ್ತಲೂ ನವಿಲಿನ ಕೇಕೆಯ ಶಬ್ದ ನಮ್ಮ ಕಿವಿಗಳನ್ನು ತುಂಬಿಬಿಟ್ಟಿತ್ತು. ಆದರೆ ಕಣ್ಣಿಗೆ ಕಾಣಿಸುತ್ತಿರಲಿಲ್ಲ. ಮಕ್ಕಳು ನವಿಲುಗಳ ಒಂದೇ ಒಂದು ದರ್ಶನಕ್ಕೆ ತವಕಿಸುತ್ತಿದ್ದರು. ಒಮ್ಮೆಲೆ ಒಂದು ದೊಡ್ಡ ಗುಂಪು ತಮ್ಮ ಗಂಭೀರವಾದ ನಡಿಗೆಯಲ್ಲಿ ಓಲಾಡುತ್ತಾ, ತಮ್ಮ ಬಣ್ಣಬಣ್ಣದ ಗರಿಗಳನ್ನು ಬೀಸುತ್ತಾ ಅಲ್ಲಿದ್ದ ಬಂಡೆಗಳ ಮೇಲೆ ಪ್ರತ್ಯಕ್ಷವಾದಾಗ, ನಮ್ಮ ಮನಸ್ಸೂ ಕೂಡಾ ಆ ಗರಿಗಳಂತೆ ಕೆದರಿ, ಕುಣಿದು, ನಮ್ಮ ಕೈಯಲ್ಲಿದ್ದ ಕ್ಯಾಮೆರಾಗಳು ಸದ್ದಿಲ್ಲದೇ ನಿರಂತರವಾಗಿ ಕ್ಲಿಕ್ಕಿಸಿದವು. ಅಷ್ಟರಲ್ಲೇ ನನ್ನ ಮಗಳು ದುರ್ಬೀನಿಂದ ನಮಗಷ್ಟೇ ಕೇಳುವಂತೆ “ಅಮ್ಮ, ಎದುರಿನ ಬಂಡೆಯ ಕಡೆಗೆ ನೋಡಿ, ಮೂರು ಕರಡಿಗಳಿವೆ” ಎಂದು ಆದೇಶಿಸಿದಳು. ನಮ್ಮ ಉತ್ಸಾಹಕ್ಕೆ ಪಾರವೇ ಇಲ್ಲ. ಕೇವಲ ಮೃಗಾಲಯಗಳಲ್ಲಿ ಕರಡಿಗಳನ್ನು ನೋಡಿದ್ದ ನಮಗೆ ಅವನ್ನು ಈ ಸ್ವಾಭಾವಿಕ ಪರಿಸರದಲ್ಲಿ ಕಂಡಾಗ ಬಹಳ ಸಂತೋಷವೆನಿಸಿತು.

dsc_0190
ಸ್ಲಾತ್ ಕರಡಿ ದರ್ಶನ

ನಮ್ಮ ರಾಜ್ಯದಲ್ಲಿ ಚಿತ್ರದುರ್ಗ, ಚಳ್ಳಕೆರೆ, ಬಳ್ಳಾರಿ, ತುಮಕೂರು ಜಿಲ್ಲೆಗಳಲ್ಲಿ ವಾಸಿಸುವ ಈ ಸ್ಲಾತ್ ಕರಡಿಗಳು ರಾತ್ರಿಯಲ್ಲಿ ಚಟುವಟಿಕೆಯಾಗಿರುವ ಕೀಟಭಕ್ಷಕಗಳಾಗಿವೆ. ರಾಮಾಯಣದಲ್ಲಿ ರಾಮ ಸೀತೆಯನ್ನು ಹುಡುಕುತ್ತಾ ಬಂಡಾಗ, ಇಲ್ಲಿಯೇ ಆನೆಗೊಂದಿಯಲ್ಲಿ ವಾನರ ಸೈನ್ಯದ ಜೊತೆಗೆ, ಕರಡಿವೀರ ಜಾಂಬವಂತನನ್ನೂ ಭೇಟಿಯಾದನೆಂದು ಹೇಳುತ್ತಾರೆ. ಹಾಗಾಗಿ ಇಲ್ಲಿ ಕರಡಿಗಳನ್ನು ಬಹಳ ಭಯಭಕ್ತಿಗಳಿಂದ ನೋಡುವ ಸಂಪ್ರದಾಯವಿದೆ. ಇಲ್ಲಿಯ ಗಣಿಗಳಲ್ಲಿ ನಡೆಯುವ ಆಕ್ರಮ ಗಣಿಗಾರಿಕೆಯ ಫಲವಾಗಿ, ಕರಡಿಗಳ ಸಂಖ್ಯೆಗೆ ಧಕ್ಕೆಯಾಗಿ ಈ ಕರಡಿಧಾಮವನ್ನು ೧೯೯೪ರಲ್ಲಿ ಪ್ರಾರಂಭಿಸಲಾಗಿದೆ. ಈ ಅರಣ್ಯಧಾಮದಲ್ಲಿ ಕರಡಿಗಳ ಜೊತೆಗೆ ಹುಲಿ, ಚಿರತೆ, ಚುಕ್ಕೆ-ಜಿಂಕೆ, ಮಾನಿಟರ್ ಹಲ್ಲಿ, ನಕ್ಷತ್ರ ಆಮೆ, ಮುಂಗುಸಿಗಳೂ ಕಾಣಸಿಗಬಹುದು. ಅಲ್ಲಲ್ಲೇ ಹಲವಾರು ಬಣ್ಣದ ಹಲ್ಲಿಗಳು, ಚಿಟ್ಟೆಗಳು ನಮ್ಮ ಕಣ್ಣಿಗೆ ಬಿದ್ದವು.

dsc_0197
ಬಣ್ಣಬಣ್ಣದ ಗರಿಗಳ ನವಿಲುಗಳ ಗುಂಪು

dsc_0235
ಬಣ್ಣದ ಹಲ್ಲಿ

ನಮ್ಮ ಮನಸ್ಸಿಗೆ ತೃಪ್ತಿಯಾದಷ್ಟು ನೋಡಿದ ನಂತರ, ಅಲ್ಲೇ ಕುಳಿತಿದ್ದ ಡ್ರೈವರ್ ಸಾರ್ ನೀವು ತುಂಗಭದ್ರ ಅಣೆಕಟ್ಟಿಗೆ ಹೋಗಬೇಕೆಂದರೆ ಈಗಲೇ ಹೊರಡಬೇಕು ಎಂದು ಎಚ್ಚರಿಸಿದಾಗ, ನಾವು ಅರೆಮನಸ್ಸಿನಿಂದಲೇ, ಕರಡಿಗಳ ದಿಕ್ಕಿನಿಂದ ನಮ್ಮ ದೃಷ್ಟಿಯನ್ನು ತೆಗೆದು ಕಾರಿನೆಡೆ ನಡೆದೆವು.

dsc_0177
ಬಣ್ಣದ ಚಿಟ್ಟೆಗಳು

ಮಾಧ್ಯಮಿಕ ಶಾಲೆಯಲ್ಲಿ ಕನ್ನಡದ ವರ-ಕವಿ ದ.ರಾ. ಬೇಂದ್ರೆ ಅವರ “ಕರಡಿ-ಕುಣಿತ” ಎಂಬ ಪದ್ಯವನ್ನು ಬಾಯಿಪಾಠ ಮಾಡಿ ಗುನುಗುತ್ತಿದ್ದ ನನ್ನ ಮನ ಆ ದಿನಗಳತ್ತ ಓಡಿತು.

ಮನಬಲ್ಲ ಮಾನವ ಕುಣಿದಾನ, ಕುಣಿಸ್ಯಾನ

ಪ್ರಾಣದ ಈ ಪ್ರಾಣಿ ಹಿಂದಾs

ಕರಡೀಯ ಹೆಸರೀಲೆ ಚರಿತಾರ್ಥ ನಡಿಸ್ಯಾನ

ಪರಮಾರ್ಥ ಎಂಬಂತೆ ಬಂದಾನ

“ಪ್ರಾಣಿ ಶಕ್ತಿಯನ್ನು, ತನ್ನ ಬುದ್ದಿಶಕ್ತಿಯಿಂದ ಪಳಗಿಸಿ ತನ್ನ ಹೊಟ್ಟೆಪಾಡಿಗೆ ಪರಮಾರ್ಥದ ವೇಶವನ್ನು ತೊಡಿಸಿದ್ದಾನೆ”.

ಕೇವಲ ಮಾನವ ತನ್ನ ಹೊಟ್ಟೆಪಾಡಿಗಾಗಿ ಈ ಪ್ರಾಣಿಯನ್ನು ಹಿಡಿದು ಪಳಗಿಸಿ, ಅದಕ್ಕೆ ಮೂಗುದಾರ ಹಾಕಿ, ಕುಣಿಸಿ ಜೀವನ ಸವೆಸುವ ರೀತಿ ನನಗೆ ಹೀನಾಯವೆನಿಸಿತು. ಸ್ವಚ್ಚಂದವಾಗಿ ಅರಣ್ಯದಲ್ಲಿ ಓಡಾಡಿಕೊಡಿರುವ ಈ ವನ್ಯಮೃಗ, ಸರಳುಗಳ ಹಿಂದೆ ಮೃಗಾಲಯದಲ್ಲಿ ಶತಪಥ ತಿರುಗುವ ರೀತಿಯೂ ಸರಿಯಲ್ಲ. ತಮ್ಮದೇ ಪರಿಸರದಲ್ಲಿ ಜೀವಿಸುವ ಈ ಮೃಗದ ಜನ್ಮಸಿದ್ಧ ಹಕ್ಕನ್ನು ಈ ದರೋಜಿ-ಕರಡಿಧಾಮದಲ್ಲಿ ಕಂಡು ಹಿಗ್ಗಿದ ನನ್ನ ಮನ, ರಾಜ್ಯ ಅರಣ್ಯ ಇಲಾಖೆಗೆ ಭೇಷ್ ಎಂದು ಬೆನ್ನುತಟ್ಟಿತು.

  ಚಿತ್ರಗಳು: ಡಾ. ಉಮಾ ವೆಂಕಟೇಶ್