ಇಂಗ್ಲೆಂಡಿನಲ್ಲಿ ಯುಗಾದಿ: ವಸಂತನಾಗಮನದ ನಾಂದಿ

ಸಪ್ಟೆಂಬರ್ ತಿಂಗಳಿನಿಂದ ನಿರಂತರ ಮಳೆಯ ಆಘಾತಕ್ಕೆ ತುತ್ತಾಗಿರುವ ಇಂಗ್ಲೆಂಡಿನಲ್ಲಿ ಕಳೆದ ಕೆಲವು ದಿನಗಳಿಂದ ಸೂರ್ಯ ಮಹಾಶಯ ಮೋಡಗಳ ಚಾದರದ ಮರೆಯಿಂದ ಹಣಕಿ ಹಾಕುತ್ತ ಕವಿದಿರುವ ಛಳಿಯ ಬಲೆಯನ್ನು ಹರಿದು ಬದಿಗೊಡ್ಡಲು ಪ್ರಯತ್ನಿಸುತ್ತಿದ್ದಾನೆ. ಅವನ ಕ್ಷೀಣ ಪ್ರಯತ್ನವನ್ನು ಹುರಿದುಂಬಿಸಲು ಒಣಗಿ ನಿಂತ ಗಿಡ ಮರಗಳು ಟಿಸಿಲೊಡೆಯುತ್ತ, ಮೈತುಂಬ ಬಣ್ಣ ಬಣ್ಣದ ಹೂಗಳನ್ನು ಹೊತ್ತು ಚಿಯರ್ ಚಿಣ್ಣರಂತೆ ಉತ್ಸಾಹದಿಂದ ತಲೆದೂಗುವುದ ಕಂಡಾಗ ವಸಂತ ಬಂದ ಎಂಬ ಉತ್ಸಾಹ ನಮ್ಮಲ್ಲೂ. ವಾತಾವರಣದಲ್ಲಿ ಕಾವು ಕೂಡುತ್ತಿದ್ದಂತೇ ಗೂಡುಗಳಿಂದ ಹೊರಬಿದ್ದು ಹೊಂಬಿಸಿಲ ಹೊಲದಲ್ಲಿ ಹೊರಳಾಡುವ ಹಂಬಲ ಹೊಮ್ಮುವುದು ಸಹಜ. ಇಂತಹ ಹಂಬಲಕ್ಕೆ ಇಂಬಾಗುವುದು ಯುಗಾದಿ. ಪ್ರತಿವರ್ಷದಂತೆ ಈ ವರ್ಷವೂ ಕನ್ನಡ ಬಳಗ ಯು.ಕೆ ಯುಗಾದಿ ಹಬ್ಬದ ಸಂಭ್ರಮದ ಕಾರ್ಯಕ್ರಮವನ್ನು ಏಪ್ರಿಲ್ ೧೩ರಂದು ಲೆಸ್ಟರ್ ನಗರದಲ್ಲಿ ಏರ್ಪಡಿಸಿತ್ತು. ಈ ಕಾರ್ಯಕ್ರಮದ ಯಶಸ್ಸಿಗೆ ಕಾರಣೀ ಭೂತರಲ್ಲಿ ಒಬ್ಬರಾದ, ಅನಿವಾಸಿ ಬಳಗದ ಸದಸ್ಯರೂ ಆದ ಡಾ. ರಾಜಶ್ರೀ ಪಾಟೀಲರು ತಮ್ಮ ಅನಿಸಿಕೆಗಳನ್ನು ಚಿತ್ರ ಸಮೇತ ಇಲ್ಲಿ ಉಣಬಡಿಸಿದ್ದಾರೆ. ಕಾರಣಾಂತರಗಳಿಂದ ಅಂದು ಬರಲಾಗದವರಿಗೆ, ವಿದೇಶಗಳಲ್ಲಿರುವ ನಮ್ಮ ಓದುಗರಿಗೆ ಈ ವರದಿ ಕಾರ್ಯಕ್ರಮದಲ್ಲಿ ಖುದ್ದಾಗಿ ಭಾಗವಹಿಸಿದ ಅನುಭವ ಕೊಡುವುದರಲ್ಲಿ ಸಂದೇಹವಿಲ್ಲ. ಪ್ರತೀ ಕನ್ನಡ ಬಳಗದ ದೀಪಾವಳಿ-ಯುಗಾದಿ ಕಾರ್ಯಕ್ರಮದಲ್ಲಿ ನಮ್ಮ ಅನಿವಾಸಿ ಬಳಗ ಸಮಾನಾಂತರವಾಗಿ ಸಾಹಿತ್ಯಿಕ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ. ಈ ಬಾರಿ ರಂಗಕರ್ಮಿ ಶ್ರೀ. ಶ್ರೀನಿವಾಸ ಪ್ರಭು ಅವರೊಂದಿಗೆ ನಡೆಸಿದ ಸಂವಾದದ ಅನುಭವವನ್ನು ಉತ್ತರ ಐರ್ಲ್ಯಾನ್ಡ್ ನಿಂದ ಮೊದಲ ಬಾರಿಗೆ ಭಾಗವಹಿಸಿದ ಶ್ರೀಮತಿ ಅಮಿತ ರವಿಕಿರಣ್ ಮುಂದಿನ ವಾರ ವಿಶದವಾಗಿ ಹಂಚಿಕೊಳ್ಳಲಿದ್ದಾರೆ. (ಸಂ)

‘ಬೇವಿನಕಹಿ ಬಾಳಿನಲಿ, ಹೂವಿನ ನಸುಗಂಪ ಸೂಸಿ ಜೀವಕಳೆಯ ತರುತಿದೆ. ಯುಗಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ.’
ನಮ್ಮೆಲ್ಲರ ಜೀವನ ಜಂಜಾಟಗಳ ನಡುವೆ ಸಂಭ್ರಮದ ಕಳೆ ತರಲು ಯುಗಾದಿ ಸಂಭ್ರಮ ಮತ್ತೆ ಬಂದಿತ್ತು ೧೩/೦೪/೨೪ ಲೆಸ್ಟರ್ ಗೆ. ಲೆಸ್ಟರ್ ಕನ್ನಡಿಗರು ೨೦೧೬ ನಿಂದ ಸಾಂಪ್ರದಾಯಿಕವಾಗಿ ಯುಗಾದಿಯನ್ನ ಸಂಭ್ರಮದಿಂದ ಆಚರಿಸುತ್ತ ಬಂದಿದ್ದಾರೆ  ಆದರೆ ಈ ಬಾರಿ ಕನ್ನಡ ಬಳಗದ ಸಹಯೋಗ ಅದರ ಮೆರಗನ್ನ ಇನ್ನೂ ಹೆಚ್ಚಿಸಿತ್ತು. ದೇಶದ ಹಲವಾರು ಮೂಲೆಗಳಿಂದ  ೬೦೦ಕ್ಕೂ ಹೆಚ್ಚು ಜನರು ಯುಗಾದಿ ಸಂಭ್ರಮವನ್ನು  ಆಚರಿಸಲು ನೆರೆದಿದ್ದರು. ಅದೇ ದಿನದಂದು ಹಲವಾರು ಕಡೆ ಯುಗಾದಿ ಸಂಭ್ರಮಾಚರಣೆ ಇದ್ದರೂ ಲೆಸ್ಟರನಲ್ಲಿ ಇಷ್ಟೊಂದು ಜನ ಸೇರಿದ್ದು ಇನ್ನೂ ವಿಶೇಷವಾಗಿತ್ತು.

ಕಾರ್ಯಕ್ರಮಕ್ಕೆ ವಿಧಿವತ್ತಾಗಿ  ವಿಘ್ನ ನಿವಾರಕ ವಿಘ್ನೇಶ್ವರನ ಪೂಜೆಯೊಂದಿಗೆ ಮತ್ತು ಸ್ತುತಿಹಾಡಿನೊಂದಿಗೆ ಓಂಕಾರ ದೊರಕಿತು. ಲೆಸ್ಟರ್ ಕನ್ನಡಿಗರು ಮತ್ತು ಕನ್ನಡ ಬಳಗ ಯುಕೆ ತಂಡಗಳು ಭಾರತದಿಂದ ಆಗಮಿಸಿದ ಜನಪ್ರಿಯ ಗಣ್ಯ ಅತಿಥಿಗಳಾದ ಶ್ರೀಯುತ ಸಿಹಿ ಕಹಿ ಚಂದ್ರು, ಶ್ರೀನಿವಾಸ ಪ್ರಭು, ವಿಶ್ವೇಶ್ ಭಟ್ ಅವರನ್ನ ಮತ್ತೂ ದೇಶದ ಮೂಲೆ ಮೂಲೆಯಿಂದ ಬಂದ ಕನ್ನಡಿಗರನ್ನ ಹೃದಯ ಪೂರ್ವಕವಾಗಿ ಬೇವು ಬೆಲ್ಲವನ್ನ ಹಂಚುವದರೊಂದಿಗೆ ಸ್ವಾಗತಿಸಿದರು. ಗಣ್ಯರು ದೀಪ ಬೆಳಗಿಸುವದರೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶುಭಕೋರಿದರು.

ಸಾಂಪ್ರದಾಯಿಕ ಭರತನಾಟ್ಯ ನೃತ್ಯಗಳಿಂದ ಕಲಾಪ್ರದರ್ಶನ ಪ್ರಾರಂಭವಾಯಿತು. ಬಿಡುವಿಲ್ಲದೆ ಸತತ ೫ ಘಂಟೆಗಳ ಕಾಲ ಕಲಾಪ್ರದರ್ಶನ ಯುಕೆಯ ವಿವಿಧ ಪ್ರದೇಶಗಳಿಂದ ಬಂದ ಕಲಾವಿದರಿಂದ ನಡೆಯಿತು .  ಚಿಕ್ಕ ಪುಟಾಣಿಗಳು ‘ಸಿಂಡರೆಲ್ಲ’ ನೃತ್ಯರೂಪಕ , ಧಾರ್ಮಿಕ ಭಾವನೆಯನ್ನು ಪುಟಿಸಿದ, ನಾಟಕೀಯ ಕನ್ನಡ ಭಾಷೆಯಲ್ಲಿ ಮೂಡಿ ಬಂದ ‘ಸೀತಾ ಅಗ್ನಿಪ್ರವೇಶ’ ದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಕರ್ನಾಟಕದ ಶ್ರೀಮಂತ ನೃತ್ಯ ವೈವಿದ್ಯತೆಯನ್ನ ಪ್ರದರ್ಶಿಸುವ ಕೋಲಾಟ , ಕಂಸಾಳೆ, ಡೊಳ್ಳು ಕುಣಿತ, ಕೊಡವ ನೃತ್ಯ ಮತ್ತು ಹುಲಿಕುಣಿತವನ್ನೊಳಗೊಂಡ ‘ಕರ್ನಾಟಕ ನೃತ್ಯದರ್ಶನ’, ಭಾರತದ ವಿವಿಧ ರಾಜ್ಯಗಳ ಮದುವೆ ಶೃಂಗಾರವನ್ನ ಬಿಂಬಿಸುವ ‘ಲಗ್ನ ಶೃಂಗಾರ’, ‘ಹಚ್ಚೇವು ಕನ್ನಡದ ದೀಪ’ ನೃತ್ಯ ರೂಪಕ, ಜನಪ್ರಿಯ ಗೀತೆಗಳನ್ನಾಧರಿಸಿದ ನೃತ್ಯಗಳು, ಹಾಡು, ವೀಣೆ ಹಾಗು ಗಿಟಾರ್ ವಾದನ ಕಾರ್ಯಕ್ರಮಗಳು ನೆರೆದವರ ಮನಸೆಳೆದವು.

ಈ ಎಲ್ಲ ಕಾರ್ಯಕ್ರಗಳು ಒಂದು ಕಡೆಯಾದರೆ, ಇನ್ನೊಂದೆಡೆ ಬಹು ಪ್ರಸಿದ್ದಿ ಪಡೆದಿರುವ ಲೆಸ್ಟರ್ ಬಾಳೆ ಎಲೆ ಭೋಜನ ಯುಗಾದಿ ಸಂಭ್ರಮಕ್ಕೆ ಸಾಂಪ್ರದಾಯಿಕ ಹೊಳಪನ್ನು ಕೊಟ್ಟಿತ್ತು. ಹೋಳಿಗೆ, ಪಾಯಸ, ಭಜಿ, ಪಲ್ಯಗಳು, ಪೂರಿ, ಚಿತ್ರಾನ್ನ, ಅನ್ನ, ಸಾರು, ಸಾಂಬಾರ್, ಉಪ್ಪಿನಕಾಯಿ, ಕೋಸಂಬ್ರಿ ಹೀಗೆ ಭಕ್ಷ್ಯಗಳ ಪಟ್ಟಿ ಎಷ್ಟು ದೊಡ್ಡದಿತ್ತೋ, ಊಟಮಾಡಿದವರಿಂದ ಊಟದ ಬಗೆಗಿನ ಹೊಗಳಿಕೆ ಪಟ್ಟಿನೂ ಅಷ್ಟೇ ದೊಡ್ಡದಾಗಿತ್ತು! ಲೆಸ್ಟರ್ ಆಯೋಜಕರೇ ಟೊಂಕಕಟ್ಟಿ ಈ ಭೂರಿ ಭೋಜನದ ಅಡುಗೆಯನ್ನು ಮಾಡಿ, ಬಡಿಸಿದ್ದು ಇನ್ನೂ ವಿಶೇಷವಾಗಿತ್ತು! ಊಟದ ವ್ಯವಸ್ಥೆ ಯಶಸ್ವಿಯಾಗಲು ಲೆಸ್ಟರ್ ಕನ್ನಡ ಕುಟುಂಬದೊಟ್ಟಿಗೆ ಹಲವಾರು ಸ್ವಯಂಸೇವಕರು ಕೆಲಸಮಾಡಿದ್ದರು. ಕರ್ನಾಟಕದಿಂದ ಬಂದ ಲೆಸ್ಟರ್ ಮತ್ತು ಡಿ ಮೊಂಟೊಫೋರ್ಟ್ ಯೂನಿವರ್ಸಿಟಿ ವಿದ್ಯಾರ್ಥಿಗಳು , ಶಿವಾಲಯ ಲೆಸ್ಟರ್ ಗುಂಪು ಮತ್ತು ಹೆಚ್ ಎಸ್ ಎಸ್ ಸ್ವಯಂಸೇವಕರು ನಗುಮುಖದಿಂದ ತಮ್ಮ ನಿಸ್ವಾರ್ಥ ಸಹಾಯ ಒದಗಿಸಿದರು.

ಸಭಾಂಗಣದ ಪಕ್ಕದಲ್ಲಿ ಆಯೋಜಿಸಿದ ಕೆಲ ಜಾಹಿರಾತುದಾರರ ಅಂಗಡಿಗಗಳು ಜನರ ಆಕರ್ಷಣೆಗೆ ಒಳಗಾದವು . ಇವುಗಳ ಜೊತೆ ಮ್ಯಾಕ್ ಮಿಲನ್ ಚಾರಿಟಿಗೋಸ್ಕರ ೧೩ ವರ್ಷದ ಹುಡುಗಿ ಖುಷಿ ಪಾಟೀಲ್ ತನ್ನ ಕೈಯಾರೆ ಬೇಕ್ ಮಾಡಿದ ವಿವಿಧ ರೀತಿಯ ಕೇಕುಗಳು ಮತ್ತು ಬಿಸ್ಕತ್ಗಳನ್ನೊಳಗೊಂಡ ಅಂಗಡಿ ಚಿಕ್ಕ ಮಕ್ಕಳು ತಮ್ಮ ತಂದೆ ತಾಯಂದಿರನ್ನ ಅಲ್ಲಿಗೆ ಕರೆದೊಯ್ಯುವಂತೆ ಮಾಡಿತ್ತು. ನೆರೆದವರ ಧಾರಾಳ ಕಾಣಿಕೆ ಜಾಹಿರಾತಿನ ನೆರವಿಲ್ಲದೆ ಅವಳ ನೀರಿಕ್ಷೆಗೂ ಮೀರಿ ಹಣಕೂಡಿಸುವಲ್ಲಿ ಯಶಸ್ವಿಯಾಯಿತು. ಅನನ್ಯ ಪ್ರಸಾದ್ (ಡಾ ಜಿ ಎಸ್ ಶಿವಪ್ರಸಾದರವರ ಮಗಳು) ಈ ವರ್ಷಾಂತ್ಯದಲ್ಲಿ ತಾವು ಒಂಟಿಯಾಗಿ ದತ್ತಿ ಕಾರ್ಯಕ್ಕಾಗಿ ಅಟ್ಲಾಂಟಿಕ್ ಸಾಗರವನ್ನು ಹುಟ್ಟು ದೋಣಿಯಲ್ಲಿ ದಾಟುವ ಸಾಹಸದ ಮಾಹಿತಿಯನ್ನು ಹಂಚಿಕೊಂಡರು. ಸಂಗ್ರಹಿಸಲಿರುವ ಹಣವನ್ನು ಯು.ಕೆ ಯ ಮಾನಸಿಕ ಆರೋಗ್ಯ ದತ್ತಿ ಮತ್ತು ಭಾರತದ ದೀನಬಂಧು ಟ್ರಸ್ಟ್ ಗಳೊಂದಿಗೆ ಹಂಚುವ ಆಕಾಂಕ್ಷೆ ಅವರದ್ದು. ಅವರ ಈ ಪ್ರಯತ್ನ ಯಶಸ್ವಿಯಾದರೆ, ಅಟ್ಲಾಂಟಿಕ್ ಸಾಗರವನ್ನು ಒಬ್ಬಂಟಿಯಾಗಿ ಹುಟ್ಟು ದೋಣಿಯಲ್ಲಿ ಕ್ರಮಿಸಿದ ಪ್ರಥಮ ಬಣ್ಣದ ಮಹಿಳೆಯಾಗಲಿದ್ದಾರೆ ಎಂಬುದು ಕನ್ನಡಿಗರಿಗೆ/ಭಾರತೀಯರಿಗೆ ಹೆಮ್ಮೆಯ ವಿಷಯ. ಅವರ ಈ ಪ್ರಯತ್ನ ಯಶಸ್ವಿಯಾಗಲೆಂದು ಎಲ್ಲರೂ ಹಾರೈಸಿದರು.  ಇದರೊಟ್ಟಿಗೆ ಕನ್ನಡ ಬಳಗ ಯುಕೆ ತಂಡದ ವಾರ್ಷಿಕ ಸಾಮಾನ್ಯ ಸಭೆ (ಎಜಿಮ್) ಮತ್ತು ಅನಿವಾಸಿ ಬಳಗದ ಕಾರ್ಯಕ್ರಮ (ಇದರ ವಿಶೇಷ ವಿವರ ಮುಂದಿನ ವಾರ) ಸಮಾನಾಂತರವಾಗಿ ನಡೆದವು.

ಮತ್ತೆ ಸಾಯಂಕಾಲ ಸಭಿಕರೆಲ್ಲ ಕಾತುರದಿಂದ ಕಾಯುತ್ತಿದ್ದ ಗಣ್ಯರ ಕಾರ್ಯಕ್ರಮಗಳು ಶುರುವಾದವು. ಶ್ರೀಯುತ ಶ್ರೀನಿವಾಸ ಪ್ರಭು ತಮ್ಮ ವೃತ್ತಿ ಬದುಕಿನ ಅನುಭವಗಳನ್ನ ಹಂಚಿಕೊಂಡು ಜನರನ್ನ ರಂಜಿಸಿದರು. ಸಭಿಕರ ಕೋರಿಕೆಗೆ ಮಣಿದು, ರಣಧೀರ ಚಿತ್ರದಲ್ಲಿ ಅವರು ನಟ ರವಿಚಂದ್ರನ್ ಅವರಿಗೆ ಧ್ವನಿ ದಾನ ಮಾಡಿದ ಸಂಭಾಷಣೆಗಳನ್ನು ಸಾದರ ಪಡಿಸಿದರು. ಆದರೆ ಅವರು ತಮ್ಮ ಕಂಚಿನ ಕಂಠದಲ್ಲಿ ಪಠಿಸಿದ ಹ್ಯಾಮ್ಲೆಟ್ ನಾಟಕದ ನಾಯಕನ ಕೊನೆಯ ಸಂಭಾಷಣೆ ಅವರ ಭಾಷಣದ ಪ್ರಮುಖ ಆಕರ್ಷಣೆಯಾಗಿತ್ತು. ಶ್ರೀಯುತ  ಸಿಹಿಕಹಿ ಚಂದ್ರು ಅವರಂತೂ ತಮ್ಮ ಮಾತಿನ ಚಾಕಚಕ್ಯತೆಯಿಂದ ಸಭಿಕರನ್ನ ನಗೆಗಡಲಲ್ಲಿ ಮುಳುಗಿಸಿದರು. ಅವರು ಕಲಾಸಾಮ್ರಾಟ್ ರಾಜಕುಮಾರ ಅವರೊಂದಿಗೆ ಕಳೆದ ಕ್ಷಣಗಳು ಎಲ್ಲರ ಮನದಲ್ಲಿ ಮರೆಯದೆ  ಉಳಿಯುವಂತವು. ಅವರು ನಡೆಸಿ ಕೊಡುವ  ಅಡುಗೆ ಕಾರ್ಯಕ್ರಮಗಳು ಕರ್ನಾಟಕದ ಮನೆಮನೆಗಳಲ್ಲಿ ಮಾತಾಗಿವೆ. ಅವರ ಸಲಹೆಯಂತೆ ಅಡುಗೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧಿಗಳು ಮನೆಯಲ್ಲಿ ಮಾಡಿದ ಅಡುಗೆಗಳ ರುಚಿ ನೋಡಿ ಚಂದ್ರು ಅವರು ವಿಜೇತರನ್ನ ಆಯ್ಕೆಮಾಡಿದರು ಮತ್ತು ಅವರ ಹೆಸರಾಂತ ಜನುಮದ ಜೋಡಿ ಸ್ಪರ್ಧೆಯನ್ನೂ ನಡೆಸಿಕೊಟ್ಟರು.

ಸಾಯಂಕಾಲದ ಲಘು ಉಪಾಹಾರ ಮತ್ತು ಚಹಾ ಜನರನ್ನ ಕೊನೆಯ ಕಾರ್ಯಕ್ರಮಕ್ಕೆ ಸಜ್ಜುಗೊಳಿಸಿತು. ಶ್ರೀಯುತ ವಿಶ್ವೇಶ್ ಭಟ್ ರವರು ಬಹುಮುಖ ಪ್ರತಿಭೆಯ ಅಭಿಯಂತರು. ಇವರು ವ್ಯಂಗಚಿತ್ರ ಮತ್ತು ಸಂಗೀತ ಲೋಕಗಳಲ್ಲಿ ತಮ್ಮ ಛಾಪನ್ನ ಮೂಡಿಸಿದ್ದಾರೆ. ಇವರ ತಮ್ಮ ವಿಭಿನ್ನ ರೀತಿಯ ಹಲವಾರು ಸಂಗೀತ ಪ್ರಕಾರಗಳನ್ನೊಳಗೊಂಡ ಪ್ರದರ್ಶನದಿಂದ  ಜನರನ್ನ ಮಂತ್ರ ಮುಗ್ಧರನ್ನಾಗಿಸಿದರು. ಇವರ ಹಾಡಿಗೆ ಜನ ಹೆಜ್ಜೆ ಹಾಕಿ ಸಂತೋಷ ವ್ಯಕ್ತ ಪಡಿಸಿದರು. ಕಾರ್ಯಕ್ರಮ ರಾತ್ರಿಯ ಭೋಜನ ಮತ್ತು ವಂದನಾರ್ಪಣೆಯೊಂದಿಗೆ ಮುಕ್ತಾಯಗೊಂಡಿತು.

ಒಟ್ಟಾರೆ ಇದು ಒಂದು ಪರಿಪೂರ್ಣವಾದ , ಪಕ್ವವಾದ, ಯುಗಾದಿ ಹಬ್ಬದ ಸಂಭ್ರಮವನ್ನೊಳಗೊಂಡ ಮತ್ತು  ಕರ್ನಾಟಕದ ಸಂಸ್ಕೃತಿಯ ವೈವಿಧ್ಯತೆಯನ್ನ ಎತ್ತಿಹಿಡಿಯುವ ಆಚರಣೆಯಾಗಿತ್ತು. ಹೀಗೆ ಹಲವಾರು ಕಾರ್ಯಕ್ರಮಗಳು ಮುಂಬರುವ ದಿನಗಳಲ್ಲಿ ನಡೆದು ಅನಿವಾಸಿ ಕನ್ನಡಿಗರ ಮನದಲ್ಲಿ ಸದಾ ತಾಯ್ನುಡಿ ಮತ್ತು ತಾಯ್ನೆಲದ ವಾಸನೆಯನ್ನು ತುಡಿಯುತ್ತಿರಲಿ ಎಂದು ಹಾರೈಸೋಣ.

ಡಾ. ರಾಜಶ್ರೀ ಪಾಟೀಲ್

ಒಂದೋ ಎರಡೋ ಬಾಳೆಲೆ ಹರಡೋ ಮತ್ತು ನನ್ನ ಮೆಚ್ಚಿನ ಲೇಖಕಿಗೊಂದು ಹೃತ್ಪೂರ್ವಕ ನಮನ

ಆತ್ಮೀಯ  ಓದುಗರಿಗೆ ನಮಸ್ಕಾರ

ರುಚಿಯಾದ ಅಡಿಗೆ ಮಾಡುವದು ಕಷ್ಟವೆಂದರೆ ಮಾಡಿದ್ದನ್ನು ತಿನ್ನುವುದೂ ಕೂಡ  ಕಷ್ಟವೆಂಬುವುದು  ಬಹು ಜನರಿಗೆ ಗೊತ್ತಿರಿಲರಾರದ ಸಂಗತಿ ಇರಬಹುದು . ಪ್ರಪಂಚದ ಬೇರೆ ಬೇರೆ ದೇಶಗಲ್ಲಿ ತಿನ್ನುವ ಆಹಾರ ವಿಭಿನ್ನವಾಗಿದ್ದರೆ, ತಿನ್ನುವ ಪದ್ಧತಿ ಕೂಡ ಅಷ್ಟೇ ವಿಭಿನ್ನವಾಗಿದೆ. ನಾನು ಮೊದಲು ಸಲ ಈ ದೇಶಕ್ಕೆ ಬಂದಾಗ ಫೋರ್ಕ್ ಮತ್ತು ಚಮಚ ಹಿಡಿದು ತಿನ್ನಲು ಹೋಗಿ ಹಾಗು ಜಪನೀಸ ನೂಡಲ್ಸನ್ನು ಕಡ್ಡಿಯಿಂದ ಎತ್ತಲು ಹೋಗಿ ನಗೆಪಾಡಾಗಿದ್ದು ಇನ್ನೂ ನೆನಪು. ಡೈನಿಂಗ್ ಟೇಬಲ್ ಮೇಲೆ ಕುಳಿತು ಆರಾಮವಾಗಿ ತಿನ್ನುವವರಿಗೆ ನಮ್ಮ ಹಳ್ಳಿಗೆ ಕರೆದೊಯ್ದು ಹಾಸಿದ ಚಾಪೆಯ ಮೇಲೆ ಕುಳಿತು ತಿನ್ನಲು ಹೇಳಿದರೆ ಎಂಥ ಕಷ್ಟವಾದೀತು? ಇಂಥ ವಿಷಯದ ಮೇಲೆ ಸರಾಳವಾಗಿ ಜುಳು ಜುಳು ನೀರಿನಂತೆ ಹರಿಯುವ ‘ ಹರಟೆ ‘ ಓದಲು ಸಿಕ್ಕರೆ ಮನಸಿಗೆ ಎಷ್ಟೊಂದು ಖುಷಿ ! ಇಷ್ಟು ಸಲೀಸಾಗಿ  ಹರಟೆಯನ್ನು ಬರೆಯಲು ಗೌರಿ ಪ್ರಸನ್ನನವರನ್ನು ಬಿಟ್ಟರೆ ಇನ್ನ್ಯಾರಿಗೆ ಸಾಧ್ಯ? ಬನ್ನಿ, ತಪ್ಪದೆ ಅವರ ಹರಟೆಯನ್ನು ಓದಿ ಆನಂದಿಸಿ .

ಒಬ್ಬೊಬ್ಬರ ಜೀವನದಲ್ಲೂ ಇನ್ನೊಬ್ಬ ಪ್ರಭಾವಿತ ವ್ಯಕ್ತಿಯ ಪ್ರಭಾವ ಇರುವದು ಸಹಜ. ನನ್ನ ಚಿಕ್ಕ ವಯಸಿನಲ್ಲಿ ಕನ್ನಡ ಸಾಹಿತ್ಯದತ್ತ ಅಭಿರುಚಿ ಬೆಳೆಯಲು ಕಾರಣರಾದವರು ನನ್ನ ನೆಚ್ಚಿನ ಕಾದಂಬರಿಕಾರ್ತಿ ‘ತ್ರಿವೇಣಿ’ ಯವರು . ಸೆಪ್ಟೆಂಬರ್ ೧ ಅವರ ಹುಟ್ಟುದಿನ . ಈ ಸಮಯದಲ್ಲಿ ನಾನು ಅವರಿಗೊಂದು ಹೃತ್ಪೂರ್ವಕ ನಮನ ಸಲ್ಲಿಸಲು ಸಣ್ಣ ಬರಹವನ್ನು ಬರೆದಿರುವೆ , ತಾವೆಲ್ಲಾ ಓದುವಿರೆಂದು ಭಾವಿಸಿರುವೆ 

ದಯವಿಟ್ಟು ಎರಡೂ ಬರಹಗಳನ್ನು ಸಮಯ ಸಿಕ್ಕಾಗ ಓದಿ , ಹಾಗೆಯೇ ಎರಡಕ್ಷರದ ಅನಿಸಿಕೆಯನ್ನು ಬರೆಯಲು ಮರೆಯಬೇಡಿ 

–  ಸಂಪಾದಕ 

ಒಂದೋ ಎರಡೋ ಬಾಳೆಲೆ ಹರಡೋ

ಗೌರಿ ಪ್ರಸನ್ನ

‘ಒಂದೋ ಎರಡೋ ಬಾಳೆಲೆ ಹರಡೋ’ ಅನ್ನುವ ಹಾಡಿನಿಂದಲೇ ನಮ್ಮ ಒನ್ನೆತ್ತಾ ಶುರುವಾಗಿ ನಾವು ರಾಕ್ಷಸ ಗಣದಿಂದ ಸಾಕ್ಷರರಾಗುವತ್ತ ಮೊದಲ ಹೆಜ್ಜೆಯಿಟ್ಟದ್ದು. ನಮಗೆ ಆಗಲೂ, ಈಗಲೂ ಊಟದ ಆಟ ಕೊಟ್ಟಷ್ಟು ಖುಷಿ ಬೇರಾವುದೂ ಕೊಟ್ಟಿಲ್ಲ ಅನಬಹುದು. ನಾ ಎಷ್ಟೋ ಸಲ ವಿಚಾರ ಮಾಡತಿರತೀನಿ. ಈ ‘ಊಟ’ ಅನ್ನೂದು ಇರಲಿಲ್ಲಂದ್ರ ಕೆಲಸನs ಇರತಿರಲಿಲ್ಲ ಅಂತ. ನಾವೂ ಗಿಡಮರಬಳ್ಳಿಗಳ ಗತೆ ಅಥವಾ ಕೋಯಿಮಿಲ್ ಗಯಾದ ‘ಜಾದೂ’ ನ ಗತೆ ಬರೀ ಸೂರ್ಯನ ಬಿಸಿಲೋ, ನೀರೋ ಇವುಗಳಿಂದನೇ ಬದುಕೂ ಹಂಗಿದ್ರ ಯಾವ ಕೆಲಸದ ರಗಳೆನೇ ಇರತಿರಲಿಲ್ಲ. ಕನಿಷ್ಠ ಪಕ್ಷ ಪಶುಪಕ್ಷಿಗಳ ಗತೆ ಸೊಪ್ಪು, ಹುಲ್ಲು, ಹಣ್ಣುಹಂಪಲ, ಹಸಿಮಾಂಸಗಳನ್ನು ಹಂಗೇ ನೇರವಾಗಿ ತಿನ್ನೂ ಹಂಗಿದ್ರ ಹೆಂಗಿರತಿತ್ತು..?! ಆವಾಗ ಈ ಭಾಂಡಿ ತೊಳಿ, ಕಟ್ಟಿ ಒರಸು, ಕಿರಾಣಿ ತಗೊಂಬಾ, ಕಾಸು, ಕಟ್ಟು, ಕುದಿಸು, ಬೇಯಿಸು, ಹೆಚ್ಚು, ಕೊಚ್ಚು, ತೊಳಿ, ಬಳಿ ಅನ್ನೋ ಯಾವ ಉಸಾಬರಿನೂ ಇರತಿರಲಿಲ್ಲ. ಹಂಗಂದ್ರ ಈ ಊಟನೇ ಎಲ್ಲಾದಕ್ಕೂ ಮೂಲ ಅಂದ್ಹಂಗಾತು. ದಾಸರೂ ಸಹಿತ ಅದಕ್ಕಾಗೇ ‘ಎಲ್ಲಾರೂ ಮಾಡುವುದು ಹೊಟ್ಟೆಗಾಗಿ’ ಅಂತ ಇನ್ ಡೈರೆಕ್ಟ್ ಆಗಿ ಈ ಊಟದ ಬಗ್ಗೆನೇ ಹೇಳ್ಯಾರ ಅನಸತದ.  ‘ತಂಡುಲದ ಹಿಡಿಯೊಂದು, ತುಂಡು ಬಟ್ಟೆಯದೊಂದು ಅಂಡಲೆತವಿದಕೇನೋ ಮಂಕುತಿಮ್ಮ’ ಅಂತಾರ ನಮ್ಮ ತಿಮ್ಮ ಗುರು.

 ಊಟಾ ಏನೋ ಎಲ್ಲಾರೂ ಮಾಡತಾರ. ಮಾಡಿದ್ದಣ್ಣೋ ಮಹರಾಯ ಅಂತ ಕೆಲವರು ತಾವೇ ಕೈ ಸುಟಗೊಂಡು ಬಾಯಿನೂ ಸುಟಗೋತಾರ. ಇನ್ನ ಕೆಲವರು ಏನೂ ಬಿಸಿಯಿಲ್ಲದೇ ಖಮ್ಮಗ ಮತ್ತೊಬ್ಬರು ಮಾಡಿ ಹಾಕಿದ್ದನ್ನ ಸುಮ್ಮ ತಿಂದು ಬಿಮ್ಮಗಿರತಾರ. ಮತ್ತೂ ಕೆಲವರು ತಿನ್ನೂತನಾ ತಿಂದು ಆಮ್ಯಾಲೆ “ಹೋಳ ಭಾಳ ಹಣ್ಣ ಬೆಂದಾವ ಅಂತಲೋ, ಬ್ಯಾಳಿ ಬೆಂದೇ ಇಲ್ಲ” ಅಂತನೋ ಕಿಟಿಪಿಟಿ ನಡಸಿರತಾರ. ಅಂತೂ ಊಟ ಅಂಬೋ ಆಟ ಅವರವರದೇ ರೀತಿಯೊಳಗ ಎಲ್ಲಾರೂ ಆಡತಿರತಾರ. ಈ ಊಟ ಮಾಡೂ ರೀತಿ, ಅದರ ವಿಧಿ -ವಿಧಾನಗಳು ಎಷ್ಟೊಂದ ನಮೂನೀರಿ?! ಜಾಗಾದಿಂದ ಜಾಗಾಕ್ಕ ಈ ಊಟದ ರೀತಿ-ನೀತಿಗಳು ಬ್ಯಾರೆ ಬ್ಯಾರೆ ಆಗತಾವ ಅನ್ರಿ. ನಮ್ಮ ಕಡೆ ಅಂದ್ರ ದಕ್ಷಿಣ ಭಾರತದಾಗ ಬಾಳೆ ಎಲೆಗಳ ಸಂಭ್ರಮ. ಏನರೇ ಹಬ್ಬ-ಹುಣ್ಣಿಮಿ, ಮದುವಿ-ಮುಂಜಿವಿ, ಆರಾಧನಿ-ಸಮಾರಾಧನಿ ಅಂತೆಲ್ಲ ಇದ್ರ  ಬಾಳೆಎಲೆ ಊಟ ಗ್ಯಾರಂಟೀರಿ. ನಾವು ಸಣ್ಣವರಿದ್ದಾಗ ರವಿವಾರಕ್ಕೊಮ್ಮೆ ಸಂತ್ಯಾಗ ಬಾಳಿ ಎಲಿ ತಂದು, ದಿಂಡ ತಗದು, ಅವನ್ನ ಹೆಚ್ಚಿ ಸಣ್ಣಸಣ್ಣ ಎಲೆಗಳನ್ನಾಗಿ ಮಾಡಿ ಒಂದು ತಟ್ಟಿನ ಚೀಲ ‘ನಮ್’ ಅನ್ನೂ ಅಷ್ಟು ಒದ್ದಿ ಮಾಡಿ ಅದರಾಗ ಸುತ್ತಿ ಇಡತಿದ್ರು ನಮ್ಮ ಮುದ್ದಣ್ಣ ಮಾಮಾ. 15-20 ದಿನಗಟ್ಟಲೇ ಛಲೋ ಇರತಿದ್ವು. ಸ್ವಲ್ಪ ಹಳದಿ ಒಡದ್ರೂ ನಮಗೇನ ಫರಕ ಬೀಳತಿರಲಿಲ್ಲ.( ಯಾಕಂದ್ರ ನಮ್ಮ ಕಣ್ಣೆಲ್ಲ ಎಲೆಯ ಮೇಲಿನ ಖಾದ್ಯಗಳ ಬಣ್ಣದೆಡೆ ನೆಟ್ಟಿರುತ್ತಿದ್ದವೆನ್ನಿ) ಊಟಾ ಆದಮ್ಯಾಲೆ ಅವೇ ಎಲೆಗಳು ಸಾಳುಂಕೆ ಅವರ ಮನೆಯ ಎಮ್ಮೆ-ಆಕಳುಗಳಿಗೆ  ಸುಗ್ರಾಸ ಭೋಜನವಾಗುತ್ತಿದ್ದವು. 

 ಈ ಬಾಳೆ ಎಲಿ ಹೆಂಗ ಹಾಕಬೇಕು ಅನ್ನೂದೇ ಒಂದು ಸಮಸ್ಯೆ ಹಲವರಿಗೆ. ಉದ್ದ ಹಾಕಬೇಕೋ, ಅಡ್ಡ ಹಾಕಬೇಕೋ, ಅದರ ಮಾರಿ ಯಾವ ಕಡೆ ಇರಬೇಕು, ಕುಡಿ ಬಾಳೆ ಎಲಿ ಹಾಕಬೇಕೋ ಬ್ಯಾಡೋ ..ಹೀಂಗ ನೂರಾ ಎಂಟು ಪ್ರಶ್ನೆ ಇರತಾವರೀ ( ಯಾಕಂದ್ರ ಚೊಚ್ಚಲ ಗಂಡಸ ಮಕ್ಕಳಿದ್ದವರು ಕುಡಿ ಬಾಳಿ ಎಲ್ಯಾಗ ಉಣಬಾರದಂತ ಶಾಸ್ತ್ರ ಅದ ಅಂತರಿ).  ಎಲಿ ಹಾಕಿದ ಮ್ಯಾಲೆ ಇನ್ನ ಸಾಲಕ ಉಪ್ಪಿನ ಹಿಡಕೊಂಡು ಚಟ್ಟಿ, ಕೋಸಂಬ್ರಿ, ಪಲ್ಯಾ, ಕಾರೇಸಾ, ಬುರಬುರಿ, ಪಾಯಸ, ಅನ್ನ, ತೊವ್ವೆಗಳಿಗಲ್ಲ ಅದರದರದೇ ನಿರ್ದಿಷ್ಟ ಜಾಗ ಇರತಾವರೀ. ಉಪ್ಪು ಎಡಕ್ಕ, ಪಾಯಸ ಬಲಕ್ಕ, ಅನ್ನದ ಬಲಬದಿಗೆ ತೊವ್ವೆ, ಅದರ ಮೇಲೆ ತುಪ್ಪ … ಹೀಂಗ ಏನೇನೋ. ಅವೆಲ್ಲ ಅದಲು ಬದಲು ಆಗೂ ಹಂಗಿಲ್ರೀ. ನೀವೇನರೇ ಪಾಯಸ ಎಡಕ್ಕ ಬಡಸಿದಿರೋ ‘ಹುಚ್ಚ ಖೋಡಿ’ ಅಂತ ಗ್ಯಾರಂಟಿ ಬಯ್ಯಿಸಿಕೋತಿರಿ. ಕೆಲವು ಮಂದಿ ಅಂತೂ ವಾಗತ್ಯ ಮಾಡಿಕೋತಾರ. ಹಂಗಂತ ಇದೇ ಸರಿ ಅಂತ ಅಲ್ರಿ. ಕೆಲವರಲ್ಲಿ ಉಪ್ಪಿಲ್ಲದೇ ಊಟ ಬಡಿಸುವಂತಿಲ್ಲ. ಇನ್ನ ಕೆಲವರಲ್ಲಿ ಮೊದಲು ಉಪ್ಪು ಹಾಕುವಂತಿಲ್ಲ. ಕೆಲವರಲ್ಲಿ ಪಾಯಸ- ಪರಮಾನ್ನದಿಂದ ಊಟ ಆರಂಭ ಆದ್ರ, ಇನ್ನ ಕೆಲವರಲ್ಲಿ ‘ಡೆಸರ್ಟ್’ಅಂತ ಊಟ ಆದಮ್ಯಾಲೆ ತಿಂತಾರ. ಕೆಲವೆಡೆ ಶುಭ ಸಂದರ್ಭಗಳಲ್ಲಿ ಮುದ್ದಿಪಲ್ಯ ನಿಷಿದ್ಧ. ಇನ್ನು ಕೆಲವೆಡೆ ಅದು ಕಂಪಲ್ಸರಿ ಇರಲೇಬೇಕು. ಕೆಲವರಿಗೆ ಭಕ್ರಿ-ಬದನೆಕಾಯಿ ಹಬ್ಬಹರಿದಿನಗಳಲ್ಲಿ ನಿಷಿದ್ಧ.  ಇನ್ನು ಕೆಲವರಲ್ಲಿ ಮದುವೆ ಊಟಕ್ಕೂ ಅವು ಬೇಕು. ಹೀಂಗ ದೇಶ-ಕಾಲ ಭೇದಗಳು ಭಾಳ ಇರತಾವ್ರಿ ಈ ಊಟದಾಗ.

ಈ ಬಾಳಿ ಎಲಿ ಊಟದ ಮಜಾನೇ ಬ್ಯಾರೆ ಇರತದ್ರಿ. ಮದುವಿ ಭೂಮದಾಗಂತೂ ಇಷ್ಟುದ್ದ ಏಕ ಎಲಿ ಮ್ಯಾಲೆ ಬಡಿಸಿದ ನಾನಾ ನಮೂನಿ ಸಂಡಿಗಿ-ಹಪ್ಪಳ-ಮಂಡಿಗೆಗಳು, ಶ್ಯಾವಿಗೆ-ಬಟವಿ ಪಾಯಸಗಳು, ಎಲೆ ಮುಂದೆ ಹಾಕಿದ ಬಣ್ಣಬಣ್ಣದ ಮನಸೆಳೆವ ರಂಗೋಲಿಗಳು, ಬೆಳಗುತ್ತಿರುವ ಸಮೆಗಳು… ನೋಡೂ ಹಂಗ ಇರತದ. ಆದ್ರ ಮಣೆ ಮ್ಯಾಲೆ ಕೂತು ಎಲೆ ತುದಿಯ ಖಾದ್ಯಗಳನ್ನೆಲ್ಲ ಬಗ್ಗಿ ಬಗ್ಗಿ ಹೆಕ್ಕಿ ತಿನ್ನೂದರಾಗ ದೊಡ್ಡ ಸರ್ಕಸ್ಸೇ ಆಗತದ. ಮೊನ್ನೆ ಇಲ್ಲೊಬ್ಬರ ಮನ್ಯಾಗ ವಾಸ್ತುಶಾಂತಿಗಂತ ಊಟಕ್ಕ ಕರದಿದ್ರು. ತಾಜಾ ಹಸರ ದೊಡ್ಡದೊಡ್ಡ ಬಾಳಿಎಲಿ ಮ್ಯಾಲೆ ಛಂದಾಗಿ ಬಡಸಿದ್ರು. ಆದ್ರ ಆ ಭಾರೀ ಜರದ ರೇಶ್ಮೆ ಸೀರೆ ಉಟಗೊಂಡು , ನಮ್ಮ ಗಜಗಾತ್ರದ ದೇಹ ಹೊತಗೊಂಡು , ಕೆಳಗ ನೆಲದ ಮ್ಯಾಲೆ ಕೂತು ಊಟಾ ಮಾಡೂದರಾಗ ‘ಊಟಾನೂ ಇಷ್ಟ ತ್ರಾಸಿಂದs’ ಅಂತ ಅನ್ನಿಸಿಬಿಡತರೀ. ಯಾಕಂದ್ರ ಕೋಸಂಬ್ರಿ, ಅಂಬೊಡೆ, ಮೈಸೂರ ಪಾಕು ಎಲ್ಲಾ ಮುಂದ ಹಾಕಿಬಿಟ್ಟಾರ್ರೀ. ಬಗ್ಗಬೇಕಂದ್ರ ನಮ್ಮ ಹೊಟ್ಟಿ ಅಡ್ಡ. ಕಡೀಕೆ ನಾ ಬಡಸಲಿಕ್ಕೆ ಬಂದವರಿಗೆ ಹೇಳೇಬಿಟ್ಟೆ. ’ಇಲ್ಲೇ ಇತ್ತತ್ತೇ ಹಾಕಿಬಿಡ್ರಿ. ಬಗ್ಗಲಿಕ್ಕೆ ಆಗಂಗಿಲ್ಲ’ ಅಂತ. ಅವರೂ ನನ್ನ ಮಾರಿ ನೋಡಿ ನಕ್ಕೋತ ಹಾಕಿ ಹೋದ್ರ ಬಿಡ್ರಿ. ಮತ್ತೇನ ಮಾಡೂದ್ರಿ? ಊಟದ ವಿಷಯ ನಾಚಿಕೊಂಡ ಕೂತರ ಹೆಂಗ ನಡೀತದ್ರೀ? 

ಈ ಬಾಳಿ ಎಲಿ ಆವಾಂತರ ಒಂದೊಂದ ಅಲ್ರೀ. ಒಂದ ಸಲ ಶಿರಸಿಗೆ ನನ್ನ ಗೆಳತಿ ಊರಿಗೆ ಹೋಗಿದ್ದೆ. ಅಕಿ ಎಲ್ಲೋ ತಮ್ಮ ನೆಂಟರ ಮನಿಗೆ ನಮ್ಮನ್ನ ಕರಕೊಂಡು ಹೋಗಿದ್ಲು. ಅವರು ನಾವು ಬಯಲುಸೀಮಿಯಿಂದ ಬಂದವರು, ತಮ್ಮೂರಿನ ಸ್ಪೆಷಲ್  ತಿನಸಬೇಕೆಂದು ತೋಟದಿಂದ ತಾಜಾ ಬಾಳಿ ಎಲಿ ಕತ್ತರಿಸಿಕೊಂಡು ಬಂದು ಮನೆಯ ತೋಟದ ರುಚಿರುಚಿಯಾದ ಘಮಗುಡುವ ಮಾವಿನಹಣ್ಣಿನ ಸೀಕರಣೆಯನ್ನು ಹಲಸಿನ ಹಪ್ಪಳದ ಜೋಡಿಗೆ ಅದರಾಗ ಬಡಿಸಿದರು. ನಾ ಕಕ್ಕಾಬಿಕ್ಕಿ. ಬಾಳಿಎಲ್ಯಾಗ ಸೀಕರಣಿ ಹೆಂಗ ತಿನ್ನೂದ್ರಿ?! ಅದು ಹರಕೊಂಡು ಹೊಂಟದ. ಕೈಯಾಗ ತಗೊಂಡು ನೆಕ್ಕಲಿಕ್ಕ ಹೋದ್ರ ಮೊಣಕೈತನಾ ಸೋರಿ ಸೀರಿ ಮ್ಯಾಲೆ ಬೀಳಲಿಕ್ಹತ್ತೇದ. ಅವರು ಆದರ ಮಾಡಿ ಬಲವಂತ ಮಾಡಿದರೂ ಹಾಕಿಸಿಕೊಳ್ಳಲಾರದಂಥ ಪರಿಸ್ಥಿತಿ. ಒಂದ ಬಟ್ಟಲದಾಗೋ, ದೊನ್ನ್ಯಾಗೋ ಹಾಕಿಕೊಡಬಾರದs ಅಂತ ಮನಸಿನಾಗ ಬಯ್ಯಕೋತ ಅಂಥ ರುಚಿಯಾದ ಸೀಕರಣೀನ್ನ ಸುಡ್ಲಿ ಈ ಬಾಳಿ ಎಲ್ಯಾಗ ಬಡಿಸಿದ್ರು ಅಂತ ತಿನ್ನಲಾರದ ಬಿಡೂದಾತು.

ಈ ಬಾಳಿ ಎಲಿ ಊಟೇನೋ ಛಂದ. ಆದ್ರ ಆಮ್ಯಾಲೇನರೇ ಎಂಜಲಾಗ್ವಾಮಾ ಮಾಡೂ ಪಾಳಿ ಬಂತೋ .. ಭಾರೀ ತ್ರಾಸರೀ. 

ಅಂತೂ ಊಟಾ ಮಾಡೂದು (ಅದೂ ಬಾಳೆ ಎಲಿದು)  ಆಟಾ ಆಡೂದರಷ್ಟ ಸರಳ ಅಲ್ಲಾ ಅನ್ನೂದು ನನ್ನ ಅಂಬೋಣ. ನೀವೇನಂತೀರಿ? 

ವಿ.ಸೂ. ಇನ್ನ ನನ್ನ ಕೊರೆತ ಮುಗದಿಲ್ಲಾ. ಈಗ ಒಂದೋ, ಎರಡೋ.. ಆಗೇದ. ಇನ್ನ ಮೂರೋ, ನಾಕೋ, ಐದೋ, ಆರೋ ಎಲ್ಲಾ ಬಾಕಿ ಅವ. ಮಾನಸಿಕವಾಗಿ ಸಿದ್ಧವಾಗಿರಿ ಕೊರೆಸಿಕೊಳ್ಳಲು..

ಮೂಲ ಕವಿಯ ಕ್ಷಮೆ ಯಾಚಿಸಿ..

ಒಂದೋ, ಎರಡೋ ..ಬಾಳೆಲೆ ಹರಡೋ

( ನೀರ ತಗೋರಿ..ಎರಡೆಳಿ ರಂಗೋಲಿ ಹಾಕ್ರಿ)

ಮೂರೋ, ನಾಕೋ ಅನ್ನವ ಹಾಕೋ

(ಚಟ್ನಿ,ಕೋಸಂಬ್ರಿ, ಪರಮಾನ್ನ??!!)

ಐದೋ, ಆರೋ ಬೇಳೆಯ ಸಾರೋ

(ತವ್ವಿ, ತುಪ್ಪ ತಗೋರಿ ಮದಲs)

ಏಳೋ, ಎಂಟೋ ಪಲ್ಯಕೆ ದಂಟೋ

(ಪಲ್ಯಾ ಮದಲs ಬರಬೇಕಿತ್ತಲ್ರೀ .)

ಒಂಬತ್ತೋ, ಹತ್ತೋ ಎಲೆ ಮುದುರೆತ್ತು

(ಸ್ವೀಟು, ಚಿತ್ರಾನ್ನ, ಮೊಸರನ್ನ ಎಲ್ರಿ?)

ಒಂದರಿಂದ ಹತ್ತು ಹೀಗಿತ್ತು..

(ಒಂದರಿಂದ ನೂರಿದ್ರೂ ನಡೀತಿತ್ರೀ..

ಯಾವುದೂ ಐಟಂ ಬಿಡಬಾರದಿತ್ರಿ)

ಊಟದ ಆಟವು ಮುಗಿದಿತ್ತು

(ಉಸಿರಿನ ಓಟವೂ  ನಿಂತಿತ್ತು..)

ನನ್ನ ಮೆಚ್ಚಿನ ಲೇಖಕಿಗೊಂದು ಹೃತ್ಪೂರ್ವಕ ನಮನ

ಶಿವಶಂಕರ ಮೇಟಿ

(ಚಿತ್ರ: ಗೂಗಲ್ ಕೃಪೆ)

ಸೆಪ್ಟೆಂಬರ್ ೧ ಕನ್ನಡದ  ಕಾದಂಬರಿಗಾರ್ತಿಯರ ಇತಿಹಾಸದಲ್ಲಿ ನೆನಪಿಡುವ ದಿನ . ಏನಿದರ ವಿಶೇಷತೆ ಎನ್ನುತ್ತೀರಾ ?

ಇದು ಕನ್ನಡದ  ಕಾದಂಬರಿ ಲೋಕ ಕಂಡ ಅಪರೂಪದ ಲೇಖಕಿ ತ್ರಿವೇಣಿಯವರ ಜನುಮ ದಿನ . ಬಾಲ್ಯದಿಂದಲೂ ನನಗೆ ಅವರ ಮೇಲಿರುವ ಅಪಾರ ಗೌರವದ ಋಣಿಯಾಗಿ,  ಇದೊಂದು ಸಣ್ಣ ಲೇಖನದ ಮೂಲಕ ಅವರಿಗೊಂದು ನಮನ .

ಕನ್ನಡದ ‘ಜೇನ್ ಆಸ್ಟಿನ್ ‘ ಎಂದೇ ಹೆಸರಾಗಿದ್ದ ತ್ರಿವೇಣಿಯವರು ಹುಟ್ಟಿದ್ದು ಸೆಪ್ಟೆಂಬರ್ ೧ , ೧೯೨೮ ರಲ್ಲಿ . ಮೈಸೂರಿನ ಚಾಮರಾಜಪುರದಲ್ಲಿ ಜನನ . ಭಾಗೀರಥಿ ಜನ್ಮನಾಮವಾದರೂ ‘ಅನಸೂಯಾ’ ಆಗಿ ಶಾಲೆಗೆ ಸೇರಿ, ‘ತ್ರಿವೇಣಿ ‘ಎಂಬ  ಲೇಖನಿ ಹೆಸರಿನಿಂದ ಕನ್ನಡ ಸಾಹಿತ್ಯಕ್ಕೆ ಚಿರ ಪರಿಚಿತರಾದವರು. ಸಾಹಿತ್ಯ ಸಂಸ್ಕೃತಿಯ ಮನೆಯ ವಾತಾವರಣದಲ್ಲಿ ಬೆಳೆದ ಅವರಿಗೆ ಬಾಲ್ಯದಿಂದಲೂ ಓದುವ ಹುಚ್ಚು ಸಹಜವಾಗಿತ್ತು ( ಬಿ ಎಂ ಶ್ರೀ  ಚಿಕ್ಕಪ್ಪ ಮತ್ತು ವಾಣಿ ಸೋದರ ಸಂಬಂಧಿ ). ಮೈಸೂರಿನ ಮಹಾರಾಣಿ ಕಾಲೇಜಿನಿಂದ ಬಂಗಾರದ ಪದಕದೊಂದಿಗೆ ಬಿ. ಎ ಮುಗಿಸಿದ  ಅವರಿಗೆ  ಮನೋವಿಜ್ಞಾನ ಮತ್ತು ಸಮಾಜಶಾಸ್ತ್ರದ ಬಗ್ಗೆ ತುಂಬ ಆಸಕ್ತಿ ಇತ್ತು. 

ಶಿಕ್ಷಕಿಯಾಗಿ ವೃತ್ತಿ ಆರಂಭಿಸಿದರೂ ಅಂತರಾಳದಲ್ಲಿ ಅಡಗಿದ್ದ ಸಾಹಿತ್ಯದ ಒಲವು ಅವರನ್ನು ಕಾದಂಬರಿ ಲೋಕಕ್ಕೆ ಕರೆದುಕೊಂಡು ಹೋಗಿತ್ತು. ಹೆಣ್ಣಿನ ಆಸೆಗಳಿಗೆ ಪುರುಷ ಪ್ರಧಾನವಾದ ಸಮಾಜದಲ್ಲಿ ಬೆಲೆಯೇ ಇಲ್ಲವೆಂದು ಪ್ರತಿಪಾದಿಸುವ ಅವರ ಮೊದಲು ಕಾದಂಬರಿ ‘ ಅಪಸ್ವರ ‘ ೧೯೫೩ ರಲ್ಲಿ ಪ್ರಕಟವಾಯಿತು. ಹೆಣ್ಣಿನ ಮಾನಸಿಕ ತುಮುಲ, ಶೋಷಣೆ, ಸಮಾಜದಲ್ಲಿ ಅವಳೆದಿರಿಸುವ ಸಮಸ್ಯೆಗಳು ಅವರ ಕಾದಂಬರಿಯ ಜೀವಾಳವಾಗಿದ್ದವು . ಮಾನಸಿಕ ರೋಗಿ ಗುಣಮುಖವಾದರೂ ಸಮಾಜ ಅವರನ್ನು ನೋಡುವ ಪರಿಯನ್ನು ‘ ಶರಪಂಜರದಲ್ಲಿ ‘ ಬಿಂಬಿಸಿದ್ದರೆ, ಯೌವ್ವನದ  ಹೊಳೆಯಲ್ಲಿ ಉಕ್ಕುವ ಕಾಮದಾಸೆ ಮತ್ತು ತಪ್ಪು ಪುರುಷನಿಗೆ ಮಾತ್ರ ಸೀಮಿತವಲ್ಲ ಹೆಣ್ಣಿಗೂ ಅನ್ವಯವಾಗುತ್ತದೆ  ಹಾಗು ಒಬ್ಬರನೊಬ್ಬರು  ಕ್ಷಮಿಸಿ ನಡೆದರೆ ಜೀವನ ಸಾರ್ಥಕವೆಂಬುವದನ್ನು ‘ಸೋತು ಗೆದ್ದವಳು’ ಎಂಬ ಕಾದಂಬರಿಯಲ್ಲಿ  ಚಿತ್ರಿಸಿದ್ದಾರೆ. ‘ಹಣ್ಣೆಲೆ ಚಿಗುರಿದಾಗ’ ದಲ್ಲಿ ವಿಧವಾ ವಿವಾಹದ ವಿಷಯವಿದ್ದರೆ ‘ಹೂವು ಹಣ್ಣು’ ನಲ್ಲಿ ಅಸಹಾಯಕ ಹೆಣ್ಣು ವೇಶ್ಯಾ ವೃತ್ತಿಯ  ಜಾಲದಲ್ಲಿ ಸಿಲುಕುವ ವ್ಯಥೆಯಿದೆ. ಅವರ ಒಂದೊಂದು ಕಾದಂಬರಿಗಳನ್ನು ವಿಮರ್ಶಿಸಲು ನೂರಾರು ಪುಟಗಳೇ ಬೇಕಾಗಬಹುದು . ಅವರು ಬರೆದ ೨೧ ಕಾದಂಬರಿಗಳು ಕನ್ನಡ ಸಾಹಿತ್ಯ ಲೋಕದ ೨೧ ಮುತ್ತುಗಳು ಎಂದರೆ ತಪ್ಪಾಗಲಾರದು.

ಐವತ್ತರಿಂದ  ಅರವತ್ತರ ದಶಕದಲ್ಲಿ ಬರೆದ ಅವರ ಕಾದಂಬರಿಗಳು ಹಳೆಯದಾದರೂ , ಕಾದಂಬರಿಯ ಕಥೆಗಳಲ್ಲಿ ಇರುವ ವಿಚಾರಧಾರೆ ಮತ್ತು ಪಾತ್ರಗಳು ಇಂದಿನ ಆಧುನಿಕ ಸಮಾಜದಲ್ಲೂ ನವ್ಯವೆಂದು ಅನಿಸುತ್ತವೆ. ಅವರ ಹಲವಾರು ಕಾದಂಬರಿಗಳು ಬೇರೆ  ಭಾಷೆಗಳಲ್ಲಿ ಅನುವಾದಗೊಂಡಿವೆ. ಅವರ ಕಾದಂಬರಿಗಳು ಸಾಮಾನ್ಯ ಓದುಗರನ್ನು ಮಾತ್ರವಲ್ಲ ಪ್ರಸಿದ್ಧ ಚಿತ್ರ ನಿರ್ದೇಶಕರನ್ನು ಕೂಡಾ ಆಕರ್ಷಿಸಿದ್ದವು . ಇಪ್ಪತ್ತೊಂದರಲ್ಲಿ ಏಳು ಕಾದಂಬರಿಗಳು ಸುಪ್ರಸಿದ್ದ ಕನ್ನಡ ಚಿತ್ರಗಳಾಗಿ ಬೆಳ್ಳಿ ತೆರೆಯನ್ನು ಕಂಡಿವೆ. ಶರಪಂಜರ , ಬೆಕ್ಕಿನ ಕಣ್ಣು ಮತ್ತು ಬೆಳ್ಳಿಮೋಡ  ಚಿತ್ರಗಳನ್ನು ಪುಟ್ಟಣ್ಣ ಕಣಗಾಲ್ ನಿರ್ದೇಶಿಸಿದ್ದರೆ , ಹಣ್ಣೆಲೆ ಚಿಗುರಿದಾಗ, ಹೂವು ಹಣ್ಣು, ಕಂಕಣ ಮತ್ತು ಮುಕ್ತಿ  ಬೇರೆ ಪ್ರಸಿದ್ಧ ನಿರ್ದೇಶಕರಿಂದ  ತೆರೆಯನ್ನು ಕಂಡಿವೆ.

ಹಲವಾರು ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬಂದಿದ್ದವು . ‘ಅವಳ ಮನೆ’ ಗೆ ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದ್ದರೆ , ‘ಕಂಕಣ’ ದ ಕಥೆಗೆ ಕರ್ನಾಟಕ ಮೋಶನ್ ಪಿಕ್ಚರ್ ಪ್ರಶಸ್ತಿ ಬಂದಿತ್ತು . 

ಸಾಹಿತ್ಯ ಜೀವನದಲ್ಲಿ ಸವಿಯಿದ್ದರೂ ಅವರ ಸ್ವಂತ ಜೀವನದಲ್ಲಿ ನೋವಿನ ಅಲೆಯಿತ್ತು. ಮೆಚ್ಚಿ ಕೈ  ಹಿಡಿದ ಪ್ರೋತ್ಸಾಹಕ ಪತಿಯಿದ್ದರೂ (ಪ್ರೊಫೆಸ್ಸರ್ ಶಂಕರ್), ಹನ್ನೆರಡು ವರ್ಷದ ದಾಂಪತ್ಯ ಜೀವನದಲ್ಲಿ ಮಕ್ಕಳಾಗಲಿಲ್ಲ ಎಂಬ ಕೊರಗು ಸದಾ ಅವರನ್ನು ಕೊರೆಯುತಲಿತ್ತು . ಎರಡು ಸಲ ಗರ್ಭಪಾತವಾದಾಗ ಅವರು ಕುಸಿದು ಹೋಗಿದ್ದರು. ತಮ್ಮ ಮಾನಸಿಕ ವೇದನೆಯನ್ನು ‘ಅತಿಥಿ ಬರಲೇ ಇಲ್ಲ’ ಎಂಬ ಕಥೆಯಲ್ಲಿ ತೋಡಿಕೊಂಡಿದ್ದಾರೆ.

ಆದರೆ  ಕೊನೆಗೂ ಅತಿಥಿ ಬಂದಾಗ ವಿಧಿ ಅವರ ಅದೃಷ್ಟದ ಪುಟವನ್ನು ಬೇರೆ ರೀತಿಯಲ್ಲಿ ಬರೆದಿತ್ತು ಜುಲೈ ೧೯ , ೧೯೬೩ ರಲ್ಲಿ ಅವರು ಹೆಣ್ಣು ಮಗುವಿಗೆ  ಜನ್ಮವಿತ್ತಿದ್ದರು. ಹತ್ತು ದಿನಗಳ ನಂತರ ಪಲ್ಮನರಿ ಎಂಬೋಲಿಸಂ (ಶ್ವಾಸಕೋಶದಲ್ಲಿ ಸಿಲುಕಿದ ರಕ್ತದ ಹೆಪ್ಪು) ಗೆ ಬಲಿಯಾಗಿ  ಕೊನೆಯ ಉಸಿರನ್ನು ಎಳೆದರು . ಮೂವತ್ತೈದರ ಹರೆಯದಲ್ಲಿ ಇನ್ನೂ ಬಾಳಿ , ಬದುಕಿ ಹೆಮ್ಮರವಾಗಬೇಕಿದ್ದ ಪ್ರತಿಭೆಯ ಸಸಿ ಕಮರಿ ಹೋಯಿತು. ಕನ್ನಡದ  ಕಾದಂಬರಿ ಲೋಕ ಒಬ್ಬ ಮಹಾನ್  ಲೇಖಕಿಯನ್ನು ಕಳೆದುಕೊಂಡಿತು. ಅವರು ಇನ್ನು ಹೆಚ್ಚಿಗೆ ಬಾಳಿ  ಬದುಕಿದ್ದರೆ  ಅದೆಷ್ಟು ಪ್ರಸಿದ್ಧ ಕಾದಂಬರಿಗಳು  ಕನ್ನಡ ಸಾಹಿತ್ಯವನ್ನು ಸೇರುತ್ತಿದ್ದವೋ? ಇನ್ನೆಷ್ಟೋ ರಂಜಿತ ಚಲನ ಚಿತ್ರಗಳು ತೆರೆ ಕಾಣುತಿದ್ದವೋ ಎಂಬುದು ಕಲ್ಪನೆ ಮಾತ್ರ ಅವರು ಬದುಕಿರುವಾಗ ಅವರ ಯಾವುದೇ ಕಾದಂಬರಿಗಳು ಚಲನ ಚಿತ್ರಗಳಾಗಿರಲಿಲ್ಲ ಎಂಬುದು ವಿಷಾದನೀಯ .

ಅವರ ಮಗಳು  ಮೀರಾ ಶಂಕರ್ ಇತ್ತೀಚಿಗೆ ತೆಗೆದುಕೊಂಡ ನಿರ್ಧಾರ ಶ್ಲಾಘನೀಯ. ಚಾಮರಾಜಪುರದಲ್ಲಿ ಸುಮಾರು ಇನ್ನೂರು ವರ್ಷದಷ್ಟು ಹಳೆಯದಾದ ಅವರ ಮನೆಯನ್ನು ‘ತ್ರಿವೇಣಿ ಮ್ಯೂಸಿಯಂ’ ಆಗಿ ಪರಿವರ್ತಿಸಲಿದ್ದಾರೆ. ಮ್ಯೂಸಿಯಂನ ಜೊತೆಗೆ ಅವರ ಹೆಸರು ನವ ಪೀಳಿಗೆಗೆ ಗೊತ್ತಾಗಲಿ ಮತ್ತು ಅಮರವಾಗಿ ಉಳಿಯಲಿ ಎಂಬುವದು ನನ್ನ ಆಸೆ.

ತ್ರಿವೇಣಿಯವರು ಇಂದಿಗೂ ನನ್ನ ನೆಚ್ಚಿನ ಲೇಖಕಿ . ಚಿಕ್ಕಂದಿನಲ್ಲಿ ನಮ್ಮ ಮನೆಯಲ್ಲಿ ದೊರೆತ ಅವರ ಎರಡು ಕಾದಂಬರಿಗಳು ನನಗೆ ಕನ್ನಡ ಸಾಹಿತ್ಯ ಲೋಕಕ್ಕೆ ದಾರಿಯನ್ನು ತೋರಿಸಿದ್ದವು . ಪುಸ್ತಕಗಳನ್ನು ಓದುವ ಹುಮ್ಮಸ್ಸವನ್ನು ಹುಟ್ಟಿಸಿದ್ದವು. ಅವರ  ಉಳಿದ  ಕಾದಂಬರಿಗಳನ್ನು ಓದುವ ತವಕ ಮನಸಿನಲ್ಲಿ ಸದಾ ಇತ್ತು ಆದರೆ  ಅವಕಾಶ ಸಿಕ್ಕಿರಲಿಲ್ಲ . ಹೈಸ್ಕೂಲಿಗೆಂದು ಪಕ್ಕದ ಬೈಲಹೊಂಗಲಕ್ಕೆ ಸೇರಿದಾಗ ನಾನು ಮೊದಲು ಮಾಡಿದ ಕೆಲಸ ಗ್ರಂಥಾಲಯದ ಸದಸ್ಯನಾಗಿದ್ದು (ಸುಳ್ಳು ವಯಸ್ಸು ಹೇಳಿ ). ಅವರ  ಎಲ್ಲ  ಕಾದಂಬರಿಗಳು ಗ್ರಂಥಾಲಯದಲ್ಲಿ ಸಿಗದೇ ಇದ್ದರೂ ಸುಮಾರು ಪುಸ್ತಕಗಳು ಸಿಕ್ಕಿದ್ದು ಮನಸಿಗೆ ಖುಷಿ ತಂದಿತ್ತು. ತನ್ಮಯನಾಗಿ ಅವರ ಕಾದಂಬರಿಯನ್ನು ಓದುತ್ತಿದ್ದರೆ ನನಗೆ  ಆ ಕಥೆ ಎಲ್ಲೋ ನಮ್ನ ಪಕ್ಕದ ಮನೆಯಲ್ಲಿಯೇ ನಡೆದಿದೆ ಎಂದು ಅನಿಸುತಿತ್ತು. ಕಾದಂಬರಿಯ ಕಥೆ ಅಷ್ಟೊಂದು ಸರಳ  ಮತ್ತು ಸಹಜವಾಗಿರುತಿತ್ತು . 

ಮುಂದೆ ಧಾರವಾಡದ ಕರ್ನಾಟಕ ಕಾಲೇಜು ಸೇರಿದಾಗ , ಅವರ ಉಳಿದ ಕಥೆಗಳನ್ನು ಓದಲು ಅವಕಾಶ  ಸಿಕ್ಕಿದ್ದು ನನ್ನ ಜೀವನದ ಸಂತೋಷದ ಘಟನೆಗಳಲ್ಲಿ ಒಂದು ಎಂದು ಹೇಳಬಲ್ಲೆ . ಅವರ ಎಲ್ಲಾ ಪುಸ್ತಕದ ಕಿಟ್ಟು ಇಂದಿಗೂ  ‘ಅಮೆಜಾನ್  ‘ ಮಾರುಕಟ್ಟೆಯಲ್ಲಿ ಐದು ಸ್ಟಾರ್ ರಿವ್ಯೂನೊಂದಿಗೆ ಮಾರಾಟವಾಗುತ್ತಿದೆ ಎಂಬುದು ಹೆಮ್ಮೆಯ ಸಂಗತಿ .