ರಾಜಕುಮಾರ ರಣಜಿತ್ ಸಿಂಹಜಿ – ಬೇಸಿಂಗ್‍ಸ್ಟೋಕ್ ರಾಮಮೂರ್ತಿ

ಪ್ರಿಯರೇ, ಬಹಳಷ್ಟು ಭಾರತೀಯರ ರಕ್ತದಲ್ಲಿ ಕ್ರಿಕೆಟ್ಟಿನ ಪ್ರೀತಿ ಕಬ್ಬಿಣದ ಅಂಶಕ್ಕಿಂತ ಹೆಚ್ಚಿರಬೇಕು ಅಂದರೆ ತಪ್ಪಾಗಲಿಕ್ಕಿಲ್ಲ. ಅಂತರರಾಷ್ಟ್ರೀಯ ಪಂದ್ಯಗಳಂತೂ ಸರಿಯೇ, ದೇಶದೊಳಗಿನ ಐಪಿಎಲ್ ಸಹ ನಮ್ಮ ಕ್ರಿಕೆಟ್ ಹುಚ್ಚಿಗೆ ಸಾಲುವುದಿಲ್ಲ. ಈಗ ಟೀವಿ, ಇಂಟರ್ನೆಟ್ಟು, ಸ್ಟ್ರೀಮಿಂಗು ಇತ್ಯಾದಿಗಳಿಂದಾಗಿ ಪಂದ್ಯಾವಳಿಗಳು ಬಂದವೆಂದರೆ ಸಾಕು, ಎಲ್ಲರ ಮುಖವೂ ಮನವೂ ಅದರಲ್ಲೇ! ಈ ಆಟದ ಮತ್ತು ಈಚೆಗಿನದೇನೂ ಅಲ್ಲವಲ್ಲ, ಇದಕ್ಕೂ ಮೊದಲೇ ರಣಜಿ ಟ್ರೋಫಿ, ದುಲೀಪ್ ಟ್ರೋಫಿ ಇತ್ಯಾದಿಗಳು ಇದ್ದವಲ್ಲ. ಆದರೆ ಈಗಿನಷ್ಟು ಅಕ್ಸೆಸಿಬಿಲಿಟಿ ಇರಲಿಲ್ಲವೆನ್ನಬಹುದು. ಈಗಿನಂತೆ ಆಗೂ ಸುಪರ್ ಸ್ಟಾರುಗಳು ಇದ್ದರು – ಡಬ್ಲೂ ಜಿ ಗ್ರೇಸ್, ಡಾನ್ ಬ್ರಾಡ್ಮನ್ ಇತ್ಯಾದಿ ಘಟಾನುಘಟಿಗಳು ಆಗಿಹೋಗಿದ್ದಾರೆ. ಅಂಥವರಲ್ಲಿ ಎದ್ದು ಕಾಣುವ ಒಬ್ಬ ಆಟಗಾರ, ಇಂಗ್ಲಿಷ್ ಕೌಂಟಿ ಮತ್ತು ಇಂಗ್ಲಂಡ್ ದೇಶದ ತಂಡದ ಪರವಾಗಿ ಆಡಿದ ’ರಾಜಕುಮಾರ’ ರಣಜಿತ್ ಸಿಂಹಜಿ, ಮೊತ್ತಮೊದಲ ಭಾರತೀಯ ಸಂಜಾತ ಆಟಗಾರ. ರಣಜಿ ಕಪ್ಪಿನಿಂದಾಗಿ ಭಾರತದಲ್ಲಿ ಅಮರನಾಗಿರುವ ಈ ಆಟಗಾರನ ಜೀವ ಇಂಗ್ಲಂಡಿನ ಕ್ರಿಕೆಟ್ಟಿನಲ್ಲಿ ಇತ್ತಂತೆ – ಈ ಬಗ್ಗೆ ಬರೆದಿರುವ ನಮ್ಮ ಅನಿವಾಸಿ ಗುಂಪಿನ ಬೇಸಿಂಗ್‍ಸ್ಟೋಕ್ ರಾಮಮೂರ್ತಿ ಅವರ ಲೇಖನ ಇಲ್ಲಿದೆ. ಈಗ ಅವರು ಬೇಸಿಂಗ್‍ಸ್ಟೋಕ್ ಬಿಟ್ಟು ಬೇರೆಡೆ ಬಂದಿದ್ದರೂ, (ಪುಟ್ಟಪ್ಪನವರ ಕುಪ್ಪಳಿಯಂತೆ) ಬೇಸಿಂಗ್‍ಸ್ಟೋಕ್ ಅವರನ್ನು ಬಿಡಲಿಕ್ಕಿಲ್ಲ. ಎಂದಿನಂತೆ ಓದಿ, ಪ್ರತಿಕ್ರಯಿಸಿ. ಧನ್ಯವಾದಗಳು – ಲಕ್ಷ್ಮೀನಾರಾಯಣ ಗುಡೂರ (ವಾರದ ’non-ಲೇಖಕ’ ಸಂಪಾದಕ).

ಸರ್ ಕೆ. ಎಸ್. ರಣಜಿತ್ ಸಿಂಹಜಿ (ರಣಜಿ)

ಭಾರತದಲ್ಲಿ ಈಗಿನ IPL ಮುಂಚೆ ರಣಜಿ ಟ್ರೋಫಿ ಅತ್ಯಂತ ಪ್ರಮುಖವಾದ ಕ್ರಿಕೆಟ್ ಪಂದ್ಯವಾಗಿತ್ತು. ೧೯ನೇ ಶತಮಾನದಲ್ಲಿ ಈಗಿನ ಮುಂಬೈ ನಗರದಲ್ಲಿ ಪಾರ್ಸಿ ಪಂಗಡದವರು ಮಾತ್ರ ಕ್ರಿಕೆಟ್ ಆಡುತ್ತಿದ್ದರು.  ನಂತರ ಇತರ ಪ್ರಾಂತ್ಯಗಳಲ್ಲೂ ಪ್ರಾರಂಭವಾಗಿ ೧೯೩೪ರಲ್ಲಿ ಅಂದಿನ ಕ್ರಿಕೆಟ್ ಸಂಸ್ಥೆಯ ಮುಖಂಡರಾಗಿದ್ದ ಅಂಥೋನಿ ಡಿ ಮೆಲ್ಲೋ ಅಂತರರಾಜ್ಯ ಸ್ಪರ್ಧೆ  ನಡೆಸುವುದಕ್ಕೆ ಸಲಹೆ ಕೊಟ್ಟರು.  ಅದು Cricket Championship of India ಹೆಸರಿನಿಂದ ಶುರುವಾಗಿ  ಪಟಿಯಾಲಾ ಮಹಾರಾಜರು  ಟ್ರೋಫಿಯನ್ನು ಕಾಣಿಕೆಯಾಗಿ ಕೊಟ್ಟ  ನಂತರ  ಈ ಪಂದ್ಯ “ರಣಜಿ ಟ್ರೋಫಿ” ಪಂದ್ಯ ಎಂದಾಯಿತು.  ಮೊದಲ ಸ್ಪರ್ಧೆ, ೪/೧೧/೧೯೩೪, ಮೈಸೂರ್ ಮತ್ತು ಮದ್ರಾಸ್ ರಾಜ್ಯದ ತಂಡದವರ ಮಧ್ಯೆ ನಡೆಯಿತು; ಅದರಲ್ಲಿ ಮದ್ರಾಸ್ ಗೆ ಜಯ ದೊರೆತಿತ್ತು. 

ಅನೇಕ ವರ್ಷ ಕೇಂಬ್ರಿಡ್ಜ್, ಸಸೆಕ್ಸ್ ಮತ್ತು ಇಂಗ್ಲೆಂಡ್ ದೇಶಕ್ಕೆ ಆಡಿದ ರಣಜಿತ್ ಸಿಂಹ ಭಾರತಕ್ಕೆ ಅಕ್ಟೊಬರ್ ೧೯೦೪ರಲ್ಲಿ ಹಿಂತಿರುಗಿದಾಗ ಕ್ರಿಕೆಟನ್ನು ಜನಪ್ರಿಯಗೊಳಿಸುವ ಪ್ರಯತ್ನ ಮಾಡಲಿಲ್ಲ, ಮತ್ತು ಅವರಿಗೆ ಈ ವಿಷಯದಲ್ಲಿ ಯಾವ ಆಸಕ್ತಿ ಸಹ ಇರಲಿಲ್ಲ. ಕೆಲವರು ಇದರ ವಿಚಾರವನ್ನು ಪ್ರಸ್ತಾಪಿಸಿದಾಗ "ನಾನು ಇಂಗ್ಲೆಂಡ್ ದೇಶಕ್ಕೆ ಆಡಿದವನು ಮಾತ್ರ" ಎಂಬ ಉದಾಸೀನದ ಉತ್ತರ ಕೊಟ್ಟನಂತೆ. ಈ ಕಾರಣದಿಂದ ಅನೇಕರು, ರಣಜಿಯನ್ನು "Father of Indian Cricket " ಅನ್ನುವುದು ಸರಿಯಲ್ಲ ಅನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ಹತ್ತೊಂಬತ್ತು ಮತ್ತು ಇಪ್ಪತ್ತನೆಯ ಶತಮಾನದ ಕ್ರಿಕೆಟ್‍ನಲ್ಲಿ ಬಹಳ ದೊಡ್ಡ ಹೆಸರು ಗಳಿಸಿದ್ದ. ಇಂಗ್ಲೆಂಡ್ ನಲ್ಲಿ ರಣಜಿಯ ಹೆಸರು ಮನೆಮಾತಾಗಿತ್ತು ಮತ್ತು ಅವನು ಆಡುತ್ತಿದ್ದರೆ ಜನರು ಕಿಕ್ಕಿರಿದು ಸೇರುತ್ತಿದ್ದರು. ಇಂಗ್ಲಂಡ್ ದೇಶದ ತಂಡದಲ್ಲಿ ರಣಜಿ ಮೊಟ್ಟಮೊದಲ ಭಾರತೀಯ ಮೂಲದ ಆಟಗಾರನಾಗಿದ್ದ.

೧೮೮೮ರಲ್ಲಿ ಹದಿನಾರು ವಯಸ್ಸಿನ ಹುಡುಗ, ರಾಜಕೋಟನ ಶಾಲೆಯಲ್ಲಿ ಕ್ರಿಕೆಟ್ ಆಡಿದ ಅನುಭವ ಮಾತ್ರ ಇದ್ದು, ಓದುವುದಕ್ಕೆ ಕೇಂಬ್ರಿಡ್ಜ್ ವಿಶ್ಯವಿದ್ಯಾಲಯಕ್ಕೆ ಬಂದು ಕ್ರಿಕೆಟ್ ನಲ್ಲಿ ದೊಡ್ಡ ಹೆಸರು ಗಳಿಸಿದ್ದು ಆಶ್ಚರ್ಯದ ವಿಚಾರವೇ ಸರಿ. ಇಲ್ಲಿ ಅವನ ವರ್ಣರಂಜಿತ ಜೀವನ ಚರಿತ್ರೆಯ ಸಂಕ್ಷಿಪ್ತ ಪರಿಚಯ ಮಾಡಿಕೊಡುವ ಪ್ರಯತ್ನ ಮಾಡಿದ್ದೇನೆ.

ಇಂಗ್ಲೆಂಡ್ ನಲ್ಲಿ ರಣಜಿ, ರಾಜಕುಮಾರ (Prince) ಎಂದು ಹೇಳಿಕೊಂಡಿದ್ದರೂ, ಈತ ರಾಜಕುಮಾರನಾಗಿರಲಿಲ್ಲ, ಅಥವಾ ಯಾವ ಅರಮನೆಯಲ್ಲೊ ಬೆಳೆಯಲಿಲ್ಲ. ಹುಟ್ಟಿದ್ದು ೧೦/೦೯/೧೮೭೨ರಲ್ಲಿ ಪಶ್ಚಿಮ ಭಾರತದ ನವಾನಗರ ಪ್ರಾಂತ್ಯದ ಸದೋದಾರ್ ಎಂಬ ಸಣ್ಣ ಊರಿನಲ್ಲಿ. ತಂದೆ ಜೀವನ್ ಸಿಂಹಜಿ, ಅಲ್ಲಿನ ರಾಜ ವಿಭಾಜಿಗೆ ದೂರದ ಸಂಬಂಧ. ರಾಜನ ಮಗ ಕಲೋಭ ಈ ರಾಜ್ಯಕ್ಕೆ ಉತ್ತರಾಧಿಕಾರಿಯಾಗಬೇಕಾಗಿತ್ತು ಆದರೆ ಅವನ ನಡವಳಿಕೆ ಮತ್ತು ದುಷ್ಟತನದಿಂದ ಅವನನ್ನು ದೂರ ಮಾಡಿ, ಹತ್ತಿರ ಸಂಬಂಧವರ ಮನೆಯಿಂದ ಒಂದು ಗಂಡು ಮಗುವನ್ನು ಆಯ್ಕೆ ಮಾಡಿದರು. ಆದರೆ, ಅಂದಿನ ವದಂತಿಗಳ ಪ್ರಕಾರ, ಈ ಮಗು ಜ್ವರದಿಂದಲೋ ಅಥವಾ ವಿಷಪ್ರಯೋಗದಿಂದಲೋ ಕೆಲವೇ ತಿಂಗಳಲ್ಲಿ ತೀರಿಹೋಯಿತು. ಎರಡನೇ ಆಯ್ಕೆ ಜೀವನ್ ಸಿಂಹಜಿಯ ಎರಡನೇ ಮಗ ರಂಜಿತ್ ಸಿಂಹಜಿ. ಬ್ರಿಟಿಷ್ ಅಧಿಕಾರಿಗಳ ಒಪ್ಪಿಗೆ ಪಡೆದು ರಾಜಕೋಟೆಯಲ್ಲಿ ಇರುವ ರಾಜಕುಮಾರ್ ಕಾಲೇಜ್ ನಲ್ಲಿ ಇವನ ವಿದ್ಯಾಭ್ಯಾಸ ಮುಂದೆವರೆಯಿತು ಆದರೆ ಜೀವನ್ ಸಿಂಹಜಿ ಮನೆಯವರ ನಡವಳಿಕೆ ಮತ್ತು ದುರಾಸೆಗಳಿಂದ ರಣಜಿಯನ್ನು ಅಧಿಕೃತವಾಗಿ ದತ್ತು ಪುತ್ರನಾಗಿ ಮಾಡಲಿಲ್ಲ. ಆದರೂ ರಾಜನಿಂದ ಆರ್ಥಿಕ ಸಹಾಯ ಮತ್ತು ನೆರವು ಇತ್ತು. ಕೆಲವು ವರ್ಷಗಳ ನಂತರ ರಾಜನ ಪರಿವಾರದಲ್ಲಿದ್ದ ಒಬ್ಬಳಿಗೆ ಒಂದು ಗಂಡು ಮಗು ಹುಟ್ಟಿ ಅವನನ್ನು ಉತ್ತರಾಧಿಕಾರಿ ಎಂದು ಘೋಷಿಸಿದರು. ಈ ವಿಚಾರ ಬಹಳ ವಿವಾದಾತ್ಮಕವಾಗಿತ್ತು, ಕಾರಣ ಈ ಮಗುವಿನ ತಾಯಿ ರಾಜನ ರಾಣಿಯಾಗಿರಲಿಲ್ಲ; ಆಕೆ ವೇಶ್ಯೆ ಮತ್ತು ಮುಸಲ್ಮಾನ ಪಂಗಡಕ್ಕೆ ಸೇರಿದವಳು ಅನ್ನುವ ವದಂತಿಗಳು ಅನೇಕವಾಗಿತ್ತು.

ರಣಜಿ, ರಾಜಕುಮಾರ್ ಕಾಲೇಜ್ ನಲ್ಲಿ ಕ್ರಿಕೆಟ್ ಕಲಿತು ೧೮೮೪ರಲ್ಲಿ ಕಾಲೇಜ್ ನಾಯಕ ಆಗಿಯೂ ಆಯ್ಕೆ ಆದ. ಆ ಶಾಲೆಯ ಹೆಡ್ ಮಾಸ್ಟರ್ ಮಿ. ಮೆಕ್ನಾಟನ್ (Mr Macnaghten) ರಣಜಿ ಮತ್ತು ಇನ್ನಿಬ್ಬರನ್ನು ೧೮೮೮ರಲ್ಲಿ ಇಂಗ್ಲೆಂಡಿಗೆ ಕರೆದುಕೊಂಡು ಹೋಗಿ, ಕೇಂಬ್ರಿಡ್ಜ್ ನಲ್ಲಿ ಓದುವ ಉದ್ದೇಶದಿಂದ ಟ್ರಿನಿಟಿ ಕಾಲೇಜಿನ Chaplin ಅಥವಾ ಪಾದ್ರಿ ಆಗಿದ್ದ ರೆವ್. ಲೂಯಿ ಬೊರಿಸೊ (Rev Louis Borrisow) ಅನ್ನುವವರ ಮನೆಯಲ್ಲಿ ವಾಸವಾಗಿ ಇರುವುದಕ್ಕೆ ಏರ್ಪಾಡು ಮಾಡಿ ರಾಜೆಕೋಟೆಗೆ ಹಿಂತಿರಿಗಿದರು. ಇಂಗ್ಲೆಂಡ್‍ನ ವಾತಾವರಣ ರಣಜಿಗೆ ಹಿಡಿಸಲಿಲ್ಲ. ಆದರೂ ಕ್ರಿಕೆಟ್ ಆಡುವ ಮತ್ತು ಕೇಂಬ್ರಿಡ್ಜ್ ನಲ್ಲಿ ಓದುವ ಆಸೆ ಇತ್ತು. ಆದರೆ, ಕಾಲೇಜ್ ಪ್ರವೇಶಕ್ಕೆ ಪರೀಕ್ಷೆಯಲ್ಲಿ ಉತ್ತೀರ್ಣನಾಗಬೇಕಾಗಿತ್ತು. ಇದು ಸಾಧ್ಯವಾಗಲಿಲ್ಲ, ಆದರೂ ಇವನನ್ನು "ಸ್ಥಾನದ ಯುವಕ" ಅಂದರೆ, Youth of Position, ಎಂದು ಪರಿಗಣಿಸಿದ್ದರಿಂದ ಕಾಲೇಜಿಗೆ ಸೇರಲು ಸಾಧ್ಯವಾಯಿತು. ರಣಜಿ ಶಿಕ್ಷಣ ಬಗ್ಗೆ ಸಾಕಷ್ಟು ಗಮನ ಕೊಡಲಿಲ್ಲ, ಕ್ರಿಕೆಟ್ ಆಡುವುದರಲ್ಲಿ ಮಾತ್ರ ತೊಡಗಿಸಿಕೊಂಡ. ೧೮೯೨ರಲ್ಲಿ ಪ್ರತ್ಯೇಕ ಮನೆಯನ್ನು ಬಾಡಿಗೆಗೆ ತೆಗೆದುಕೊಂಡು, ಮನೋರಂಜನೆಗೆ ಅದ್ದೂರಿಯಾಗಿ ಖರ್ಚು ಮಾಡಿ ತಾನು ರಾಜಮನೆತದವನು ಅನ್ನುವ ಭಾವನೆ ಕಲ್ಪಿಸಿದ. ಆದರೆ ಹಣ ಮಾತ್ರ ಸಾಲದಿಂದ!

ಇಂಗ್ಲೆಂಡ್ ಬಾರ್ ಪರೀಕ್ಷೆಗೆ ಇನ್ನಷ್ಟು ಹಣಸಹಾಯ ಬೇಕೆಂದು ವಿಭಾಜಿ ರಾಜನಿಗೆ ಮನವಿ ಮಾಡಿದಾಗ, ರಾಜ ಹಣ ಕಳಿಸಲು ಬಾರ್ ಪರೀಕ್ಷೆ ಮುಗಿದಂತೆ ಭಾರತಕ್ಕೆ ಹಿಂತಿರಿಗಬೇಕು ಅನ್ನುವ ಷರತ್ತು ಹಾಕಿದ. ಆದರೆ ರಣಜಿ ಈ ಪರೀಕ್ಷೆಯಲ್ಲಿ ಭಾಗವಹಿಸಲಿಲ್ಲ ಮತ್ತು ಹಣಕಾಸಿನ ಸಮಸ್ಯೆ ಬಗೆಹರಿಯಲಿಲ್ಲ.
೧೮೯೨/೩ ರಲ್ಲಿ ಕೇಂಬ್ರಿಡ್ಜ್ ತಂಡಕ್ಕೆ ಆಯ್ಕೆ ಆಗಿ ಹೆಸರುಮಾಡಿಕೊಂಡ.  ನಂತರ ಕೇಂಬ್ರಿಡ್ಜ್ Blue ಪ್ರಶಸ್ತಿ ಸಹ ದೊರಕಿತು.  ಭಾರತಕ್ಕೆ ಹಿಂತಿರುಗಲಿಲ್ಲವಾದ ಕಾರಣದಿಂದ ವಿಭಾಜಿ ಹಣ ಸಹಾಯವನ್ನು ನಿಲ್ಲಿಸಬೇಕಾಯಿತು.  ರಣಜಿ, ಹಲವಾರು ಬ್ರಿಟಿಷ್ ಅಧಿಕಾರಿಗಳ ಶಿಫಾರಸಿನಿಂದ ಇನ್ನಷ್ಟು ಹಣವನ್ನು ಸಾಲದ ರೂಪದಲ್ಲಿ ವಿಭಾಜಿ ಕೊಟ್ಟದ್ದು ಸ್ವಲ್ಪ ಸಮಾಧಾನವಾಯಿತು. 
    
ಕೇಂಬ್ರಿಡ್ಜ್  ತಂಡಕ್ಕೆ (೧೮೯೦-೧೮೯೩) ಆಡಿದ ನಂತರ ರಣಜಿ ಸಸೆಕ್ಸ್ (Sussex) ಕೌಂಟಿಗೆ ೧೮೯೫-೧೯೧೨ ವರೆಗೆ ಆಡಿ, ೧೮೯೯-೧೯೦೩ರಲ್ಲಿ ಕಾಪ್ಟನ್ ಸಹ ಆಗಿದ್ದ.  ಒಟ್ಟು ೩೦೦೦ ರನ್ನುಗಳನ್ನು ೧೮೯೯ ಮತ್ತು ೧೯೦೦ರ ಅವಧಿಯಲ್ಲಿ ಹೊಡದಿದ್ದ. 

ಆಸ್ಟ್ರೇಲಿಯಾ  ತಂಡ ೧೮೯೬ ನಲ್ಲಿ ಇಂಗ್ಲೆಂಡ್ ಪ್ರವಾಸ ಮಾಡಿತು (Ashes Series).  ಅನೇಕರು, ಲಾರ್ಡ್ಸ ಮೈದಾನದಲ್ಲಿ ನಡೆದ ಮೊದಲನೆಯ ಟೆಸ್ಟ್ ತಂಡದಲ್ಲಿ ರಣಜಿ ಅಡುತ್ತಾನೆ ಎಂದು ಊಹಿಸಿದ್ದರು.  ಆದರೆ MCC ಯ ಅಧ್ಯಕ್ಷ ಲಾರ್ಡ್ ಹ್ಯಾರಿಸ್ ಇದಕ್ಕೆ ಒಪ್ಪಲಿಲ್ಲ; ಕಾರಣ, ಜನಾಂಗೀಯ ತಾರತಮ್ಯ (Racial discrimination).  ಆದರೆ ಓಲ್ಡ್ ಟ್ರಾಫರ್ಡ್ (Old Trafford) ನಲ್ಲಿ ನಡೆದ ಎರಡನೆಯ ಟೆಸ್ಟ್ ನಲ್ಲಿ  ರಣಜಿ ತಂಡದಲ್ಲಿ ಸೇರಿದ್ದ.  ಇದಕ್ಕೆ ಮುಂಚೆ ರಣಜಿ ಆಡುವುದಕ್ಕೆ ಆಸ್ಟ್ರೇಲಿಯದ ಕ್ಯಾಪ್ಟನ್ ತನ್ನ ಅಭ್ಯಂತರ ಇಲ್ಲ ಎಂದ ಮೇಲೆ ರಣಜಿಯ ಆಯ್ಕೆ ಆಯಿತಂತೆ!  ಮೊಟ್ಟಮೊದಲನೆಯ ಬಾರಿಗೆ ಒಬ್ಬ ಭಾರತೀಯ ಪ್ರಜೆ ೧೬/೦೭/೧೮೯೬ ರಂದು ಇಂಗ್ಲೆಂಡ್ ದೇಶದ ತಂಡದಲ್ಲಿ ಭಾಗವಹಿಸಿದ್ದು.
 
ರಣಜಿ, ಮೊದಲನೆಯ ಇನ್ನಿಂಗ್ಸ್ ನಲ್ಲಿ ೬೨ ಮತ್ತು ಎರಡನೇ ಇನ್ನಿಂಗ್ಸ್ ನಲ್ಲಿ ೧೫೪ ಅಜೇಯ (not  out) ರನ್ನುಗಳನ್ನು ಮಾಡಿ ಇಂಗ್ಲೆಂಡ್ ತಂಡಕ್ಕೆ ಶಾಶ್ವತ ಆಟಗಾರನಾಗಿ ಸೇರಿದ.
  
೧೮೯೬ರಲ್ಲಿ ರಣಜಿ ಆರೋಗ್ಯ ಸ್ವಲ್ಪ ಹದಗೆಟ್ಟಿತ್ತು. ಈ ಸಮಯದಲ್ಲಿ, ಕ್ರಿಕೆಟ್ ಆಟದ ತನ್ನ ಅನುಭವ ಮತ್ತು ಆಡುವ ರೀತಿ ಬಗ್ಗೆ ಬರೆಯುವ ಯೋಚನೆ ಬಂತು.  ಅವನ ಸ್ನೇಹಿತರಾಗಿದ್ದ ಚಾರ್ಲ್ಸ್ ಫ್ರೈ ಮತ್ತು ಡಾಕ್ಟರ್ ಬಟ್ಲರ್ ನೆರವಿನಿಂದ ತನ್ನ Jubilee Book of Cricket ಪುಸ್ತಕ ಪ್ರಕಟಿಸಿದ.  ಇದೇ ವರ್ಷ ವಿಕ್ಟೋರಿಯಾ ರಾಣಿಯ ರಾಜ್ಯಭಾರದ ೨೫ನೇ ವರ್ಷದ (ರಜತ ಮಹೋತ್ಸವ, silver jubilee) ಮಹೋತ್ಸವ ಆದ್ದರಿಂದ ರಣಜಿಯ ಪುಸ್ತಕಕ್ಕೆ Jubilee ಹೆಸರು ಬಂದಿದ್ದು.
   
೧೮೯೭-೯೮ ನಲ್ಲಿ  ಆಸ್ಟ್ರೇಲಿಯ ಪ್ರವಾಸಕ್ಕೆ ಹೋದ ಇಂಗ್ಲೆಂಡ್ ಪಂಗಡದಲ್ಲಿ ರಣಜಿ ಸಹ ಸೇರಿದ್ದ.  ಮೊದಲನೆಯ ಟೆಸ್ಟ್ ನಲ್ಲಿ ಮಾಡಿದ ೧೭೫ ರನ್ನುಗಳು ಸೇರಿ ಒಟ್ಟು ೧೧೫೭ ರನ್ನುಗಳನ್ನು ಹೊಡೆದು ಆ ದೇಶದಲೂ ಜನಪ್ರಿಯನಾದ.  ರಣಜಿಯ ನೆಚ್ಚಿನ "leg glance" ವಿಧಾನ (technique) ಎಲ್ಲರ  ಮೆಚ್ಚಿಗೆಯನ್ನು ಪಡೆಯಿತು.
 
ಆಸ್ಟ್ರೇಲಿಯಾ ಪ್ರವಾಸ ಮುಗಿದಮೇಲೆ, ಇಂಗ್ಲೆಂಡ್ ತಂಡ ಕೊಲಂಬೊ ಮೂಲಕ ಬಂದಾಗ ರಣಜಿ ಅಲ್ಲೇ ಇಳಿದು ಭಾರತಕ್ಕೆ ಬಂದ.  ೧೮೯೬ ರಲ್ಲಿ ರಾಜ ವಿಭಾಜಿಯ ನಿಧನವಾದ ಮೇಲೆ ಉತ್ತರಾಧಿಕಾರಿಯಾಗಿದ್ದ ಹನ್ನೆರಡು ವರ್ಷದ ಜಸವಂತ್ ಸಿಂಹಜಿ ನವಾನಗರದ ಪಟ್ಟಕ್ಕೆ ಬಂದ.  ರಣಜಿಗೆ ತಾನು ರಾಜ್ಯವನ್ನು ಆಳುವ ಅವಕಾಶ ಕಳೆಯಿತು ಎನ್ನಿಸಿ ಇಂಗ್ಲೆಂಡ್ ನಲ್ಲಿ ಕ್ರಿಕೆಟ್ ನಲ್ಲಿಯೇ ಇನ್ನೂ  ಹೆಸರು ಮಾಡುವ ನಿರ್ಧಾರಕ್ಕೆ ಬಂದಿದ್ದರೂ, ಜಸವಂತ್  ಸಿಂಹಜಿಯ ಉತ್ತರಾಧಿಕಾರದ ಮೇಲೆ ಸವಾಲನ್ನು ಹಾಕಿದ.  ಆದರೆ ಇದು ಯಶಸ್ವಿಯಾಗಲಿಲ್ಲ. ಅಷ್ಟೇ ಅಲ್ಲದೆ ವಿಭಾಜಿ ಇದ್ದಾಗ ಹಣ ಸಹಾಯವಿತ್ತು, ಈಗ ಅದೂ ನಿಲ್ಲುವಂತಿತ್ತು. 

ಅಧೃಷ್ಟಕ್ಕೆ ಪಾಟಿಯಾಲಾದ ಮಹಾರಾಜ ಮತ್ತು ಕ್ರಿಕೆಟ್ ಪ್ರೇಮಿ ರಾಜಿಂದರ್ ಸಿಂಗ್ ಅವರು ರಣಜಿಯ ನೆರವಿಗೆ ನಿಂತು ಹಣ ಸಹಾಯ ಮಾಡಿದ ನಂತರ ರಣಜಿ ಇಂಗ್ಲೆಂಡ್ ಗೆ ಹಿಂತಿರುಗಿ ಸಸೆಕ್ಸ್‌ನ ಕ್ಯಾಪ್ಟನ್ ಆದ ಮತ್ತು ಇಂಗ್ಲೆಂಡ್ ತಂಡಕ್ಕೂ ಸೇರಿದ.   ಆದರೆ ೧೯೦೦ ರಲ್ಲಿ ರಾಜಿಂದರ್ ಸಿಂಗರ ನಿಧನವಾದನಂತರ ರಣಜಿಯ ಆದಾಯ ಕುಸಿದು ದಿವಾಳಿತನವನ್ನು ಎದುರಿಸಬೇಕಾಯಿತು (bankruptcy).  ಇದನ್ನು ಪರಿಹರಿಸಲು ೧೯೦೧ ಡಿಸೆಂಬರ್ ನಲ್ಲಿ ಭಾರತಕ್ಕೆ ಹಿಂತಿರುಗಿ ಅನೇಕರನ್ನು ಭೇಟಿಮಾಡಿದ ಮೇಲೆ ಸ್ವಲ್ಪ ಮಟ್ಟಿಗೆ ರಣಜಿಯ ಆರ್ಥಿಕ ಸ್ಥಿತಿ ಕುದುರಿತು.  ೧೯೦೨ರಲ್ಲಿ ಇಂಗ್ಲೆಂಡ್ ನಲ್ಲಿ ಪುನಃ ಸಸೆಕ್ಸ್ ತಂಡದ ಕ್ಯಾಪ್ಟನ್ ಆದರೂ ಇವನ ಆಡುವ ರೀತಿ ಬದಲಾಗಿ  ಆಟದ ಶೈಲಿಯಿಂದ ಅನೇಕರಿಗೆ ನಿರಾಶೆಯಾಯಿತು.  ರಣಜಿಯ ಜೀವನಚರಿತ್ರಗಾರ (biographer) ಸೈಮನ್ ವೈಲ್ಡನ ಊಹೆಯ ಪ್ರಕಾರ ಇದಕ್ಕೆ ಮುಖ್ಯ ಕಾರಣ ರಣಜಿತ್ ಸಿಂಹನ ಕಠಿಣ ಆರ್ಥಿಕ ಪರಿಸ್ಥಿತಿ. 

ನವಾನಗರವನ್ನು ಆಳುವ ಇನ್ನೂ ಆಸೆ ಇಟ್ಟಿಕೊಂಡು ೧೯೦೪ರಲ್ಲಿ ಸ್ನೇಹಿತ ಆರ್ಚಿ ಮೆಕ್‍ಲಾರೆನ್ ಜೊತೆ ಭಾರತಕ್ಕೆ ಬಂದು, ಬ್ರಿಟಿಷ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರೂ ರಣಜಿಗೆ ಹೆಚ್ಚು ಬೆಂಬಲ ಸಿಗಲಿಲ್ಲ.  ಅದೂ ಅಲ್ಲದೆ ಮನ್ಸೂರ್ ಕುಚರ್ ಅನ್ನುವವನು ಕೊಟ್ಟ ಸಾಲ ಹಿಂತಿರುಗಿ ಪಡೆಯಲು ಬಾಂಬೆ ಹೈಕೋರ್ಟ್ ನಲ್ಲಿ ಮೊಕದ್ದಮೆ ಸಹ ಹಾಕಿದ್ದರಿಂದ ೧೯೦೬ರ ವರೆಗೆ ಇಂಗ್ಲೆಂಡ್ ಗೆ ಹಿಂತಿರುಗುವುದು ಸಾಧ್ಯವಾಗಲಿಲ್ಲ.
 
೧೪/೦೮/೧೯೦೬ ರಂದು ನವಾನಗರದ ರಾಜನಾಗಿದ್ದ ಜಸವಂತ್  ಸಿಂಹಜಿ ಜ್ವರ ಬಂದ ಕಾರಣದಿಂದ ನಿಧನನಾದ ಸುದ್ದಿ ಬಂತು.  ಜಸವಂತ್ ಸಿಂಹಜಿಯ ಆರೋಗ್ಯಕ್ಕೆ ಯಾವ ಸಮಸ್ಯೆ ಇರಲಿಲ್ಲ; ಅಂದಿನ ವದಂತಿಗಳ ಪ್ರಕಾರ ಈ ಸಾವು ವಿಷಪ್ರಯೋಗದಿಂದ ಉಂಟಾಯಿತು ಅನ್ನುವುದು ಅನೇಕರ ನಂಬಿಕೆ.  ಅದಾಗಿ ಆರು ತಿಂಗಳವರೆಗೆ ಬ್ರಿಟಿಷ್ ಅಧಿಕಾರಿಗಳು ಈ ರಾಜ್ಯದ ಹೊಸ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲಿಲ್ಲ.  ನಾಲ್ಕು ಪ್ರಾತಿನಿಧ್ಯರು - ರಣಜಿ, ವಿಭಾಜಿಯ ಮೊಮ್ಮಗ ಲಕೋಭ ಮತ್ತು ಜಸವಂತ್ ಸಿಂಹಜಿಯ ತಾಯಿ, ಸರ್ಕಾರಕ್ಕೆ ಮನವಿ ಮಾಡಿದರು.  ಕೊನೆಗೆ ಬ್ರಿಟಿಷ್ ಅಧಿಕಾರಿಗಳು, ರಣಜಿಯ ಹಿನ್ನಲೆ  ನೋಡಿ ಅವನನ್ನು ಆಯ್ಕೆ ಮಾಡಿದರು.  ಹಲವಾರು ತಿಂಗಳ ನಂತರ, ೧೧/೦೩/೧೯೦೭ ರಂದು ರಣಜಿ Colonel His Highness Sir Ranjitsinhaji Vibhaji, Jam Sahib of Nawanagar ಆಗಿ  ಪಟ್ಟಕ್ಕೆ ಬಂದ. ಈ ಸ್ಥಾನಕ್ಕೆ ಬಂದಮೇಲೆ ಬಾಂಬೆ ಹೈ ಕೋರ್ಟ ನಲ್ಲಿದ್ದ ಮೊಕದ್ದಮೆಯನ್ನು ವಾಪಸ್ಸು ಪಡೆಯುವುದು ಸಾಧ್ಯವಾಯಿತು.
 
ಇವನ ರಾಜ್ಯದಲ್ಲಿ ಮಳೆ ಇಲ್ಲದೆ ಬರಗಾಲದಿಂದ ಜನರ ಪರಿಸ್ಥಿತಿ ಗಂಭೀರವಾಗಿತ್ತು, ಪರಿಹಾರ ಕೊಡುವುದಕ್ಕೆ ರಾಜ್ಯದ ಒಡವೆಗಳನ್ನು ಮಾರಬೇಕಾಯಿತು.  ಮತ್ತು ಇತರ ರಾಜ್ಯಗಳಿಂದ ಸಹಾಯ ಪಡೆದು ರಾಜ್ಯಕ್ಕೆ ಸೇರಿದ ಸಲಾಯ ಎಂಬ ಸಮುದ್ರ ತೀರದಲ್ಲಿ ಬಂದರು ಕಟ್ಟಿ ವ್ಯಾಪಾರಕ್ಕೆ ಅನುಕೂಲವಾಗುವಂತೆ ಮಾಡುವುದು ಮತ್ತು ಇತರ ಕಾಮಗಾರಿಕೆ ಕೆಲಸಗಳು ಪ್ರಾರಂಭ ವಾಯಿತು.  ಆದರೆ ರಣಜಿಗೆ ಆಡಳಿತದ ಅನುಭವ ಇರಲಿಲ್ಲವಾದ್ದರಿಂದ ಈ ಸುಧಾರಣೆಗಳನ್ನು ಜಾರಿಗೆ ತರುವುದು ಕಷ್ಟ ವಾಯಿತು.  ಇವನ ಆರೋಗ್ಯ ಬೇರೆ ಹದಗೆಟ್ಟಿತು ಮತ್ತು ಟೈಫಾಯಿಡ್  ಜ್ವರದಿಂದ ಕೆಲವು ತಿಂಗಳು ಹಾಸಿಗೆ ಹಿಡಿದಿದ್ದ.  ವೈದ್ಯರ ಸಲಹೆ ಮೇಲೆ ವಿಶ್ರಾಂತಿಗೆ ಇಂಗ್ಲೆಂಡ್ ನಲ್ಲಿ  ಕೆಲವು ತಿಂಗಳು ಕಳೆಯಲು ಹಿಂತಿರಿಗಿ  ಗ್ರಾಮಾಂತರದಲ್ಲಿ ದೊಡ್ಡ ಮನೆಯನ್ನು ಬಾಡಿಗೆಗೆ ತೆಗೆದುಕೊಂಡು  ಹಲವಾರು ತಿಂಗಳು ಕಳೆದ.  ಆದರೆ ಸಾಲಗಾಲರ  ಕಾಟ ಮಾತ್ರ ತಪ್ಪಲಿಲ್ಲ, ಅನೇಕ ತಿಂಗಳು ಈ ಮನೆ ಬಾಡಿಗೆ ಕೊಡದೆ ಇದ್ದರಿಂದ, ಮಾಲೀಕ ಇಂಡಿಯಾ ಕಚೇರಿಗೆ ದೂರು ಸಹ ಕೊಟ್ಟ.  ತನ್ನ ರಾಜ್ಯದಿಂದ ದುಡ್ಡು ಬರುವ ಸಾದ್ಯೆತೆ ಇರಲಿಲ್ಲ, ಅಲ್ಲಿಯ ಬೊಕ್ಕಸ ಖಾಲಿಯಾಗಿತ್ತಲ್ಲ!  ೧೯೦೮ರಲ್ಲಿ ಪುನಃ ಕ್ರಿಕೆಟ್ ಆಡುವುದಕ್ಕೆ ಪ್ರಾರಂಭಿಸಿದ. ಸಮಯ ಸಿಕ್ಕಾಗ ರೆವ್. ಬೊರಿಸೊ ಅವರ ಮನೆಯಲ್ಲಿ ಇದ್ದು ಅವರ ಮಗಳು ಈಡಿತ್ ಅನ್ನು ಮದುವೆಯಾಗುವ ಪ್ರಯತ್ನ ಪಟ್ಟ.  ಆದರೆ ಅಂದಿನ ಸಮಾಜದ ನಿರ್ಬಂಧನೆಗಳಿಂದ ಇದು ಸಾಧ್ಯವಾಗಲಿಲ್ಲ ಮತ್ತು ಅವಳ ತಂದೆ ಈ ಸಂಬಂಧವನ್ನು ನಿರಾಕರಿಸಿದರಂತೆ.  ಕೊನೆಗೆ ೧೯೦೮ರಲ್ಲಿ ಭಾರತಕ್ಕೆ ಹಿಂತಿರುಗಿ ತನ್ನ ರಾಜ್ಯವನ್ನು ಆಳುವ ಪ್ರಯತ್ನ ಮಾಡಿದ.  ರಾಜ್ಯದ ಪರಿಸ್ಥಿತಿ ಇನ್ನೂ ಸುಧಾರಿಸಿರಲಿಲ್ಲ, ಬರಗಾಲ ಮತ್ತು ಕ್ಷಾಮ ಜನರನ್ನು ಕಾಡುತಿತ್ತು.  ತನ್ನ ಆದಾಯವನ್ನು ಹೆಚ್ಚುಮಾಡುವ ಸಮಯ ಅಲ್ಲದಿದ್ದರೂ, ಹೊಸ ತೆರಿಗೆಯನ್ನು ವಿಧಿಸಲು ಪ್ರಯತ್ನ ಪಟ್ಟ.  ಆದರೆ ಅಂದಿನ ಬ್ರಿಟಿಷ್ ಅಧಿಕಾರಿಗಳು ಇದನ್ನು ತಡೆದು ರಣಜಿ ಜೊತೆ ಚರ್ಚೆ ನಡಿಸಿ, ೩-೪ ವರ್ಷ ನವಾನಗರದಲ್ಲೇ ಇದ್ದು ರಾಜ್ಯವನ್ನು ಆಳುವುದಕ್ಕೆ ಸಲಹೆ ಕೊಟ್ಟರು, ಆದರೆ  ೧೯೧೨ರಲ್ಲಿ ರಣಜಿ ಪುನಃ ಇಂಗ್ಲೆಂಡ್ ಗೆ  ಹಿಂತಿರುಗಿ ಸಸೆಕ್ಸ್ ಕ್ರಿಕೆಟ್ ತಂಡಕ್ಕೆ  ಸೇರಿದ.  ಅನೇಕರಲ್ಲಿ ಮಾಡಿದ ಸಾಲದಿಂದ ತಪ್ಪಿಸಿಕೊಳ್ಳುವುದಕ್ಕೆ ಕಷ್ಟವಾಯಿತು.  ಕೆಲವರು ಇವನ ಮೇಲೆ ಮೊಕದ್ದಮೆ ಹಾಕಿದ್ದರೂ, ರಣಜಿ ಭಾರತದ ಒಬ್ಬ ರಾಜಮನೆತನದವನು ಆದ್ದರಿಂದ ಇಂಗ್ಲೆಂಡ್ ನ್ಯಾಯಾಲಯಕ್ಕೆ ಇವನ ಮೇಲೆ ಯಾವ ಹಿಡಿತ ಇಲ್ಲ ಎಂದು ಅವನ ವಕೀಲರು ವಾದ ಮಂಡಿಸಿದರು!  ಕೊನೆಗೆ ಹಾಗೂ ಹೀಗೂ ಮಾಡಿ ಕೆಲವರಿಗೆ ಸಾಲವನ್ನು ಹಿಂತಿರುಗಿಸಿ ೧೯೧೩ರಲ್ಲಿ ನವಾನಗರಕ್ಕೆ ಬಂದು ಆಳುವ ಪ್ರಯತ್ನ ಮಾಡಿದ.  ರಣಜಿ ಇಂಗ್ಲೆಂಡ್ನಲ್ಲಿ ಕ್ರಿಕೆಟ್ ಆಡುವುದರಲ್ಲಿ ಕಾಲ ಕಳೆಯುತ್ತಿದ್ದಾಗ ನವಾನಗರದ ಅಭಿವೃದ್ಧಿಯನ್ನು ಬ್ರಿಟಿಷ್ ಅಧಿಕಾರಿಗಳು ಕೈಗೆತ್ತಿಕೊಂಡು ರಾಜ್ಯದಲ್ಲಿ  ಬೇಕಾಗಿದ್ದ ಮೂಲ ಸೌಲಭ್ಯಗಳನ್ನು ಒದಗಿಸಿಕೊಟ್ಟಿದ್ದರು. 

೧೯೧೪ರಲ್ಲಿ ಮೊದಲನೆಯ ಮಹಾ ಯುದ್ಧ ಪ್ರಾರಂಭವಾದಾಗ ರಣಜಿ ತನ್ನ ರಾಜ್ಯದ ಸಂಪೂರ್ಣ ಬೆಂಬಲ ನೀಡಿ, ಇಂಗ್ಲೆಂಡಿನ ತನ್ನ ಮನೆಯನ್ನು ಆಸ್ಪತ್ರೆಯಾಗಿ ಉಪಯೋಗಿಸುವುದಕ್ಕೆ ಅನುಮತಿ ನೀಡಿದ.  ಇದಲ್ಲದೆ ೧೯೧೪ರಲ್ಲಿ ಬ್ರಿಟಿಷ್ ಸೈನ್ಯಕ್ಕೆ ಸೇರಿ ಗೌರವಾನ್ವಿತ ಮೇಜರ್ ಹುದ್ದೆಗೆ ಅರ್ಹನಾದ.  ಆದರೆ ಭಾರತೀಯ ರಾಜಮನೆತವರು  ಯುದ್ಧದಲ್ಲಿ ಭಾಗವಹಿವುದಕ್ಕೆ ಅನುಮತಿ ಇರಲಿಲ್ಲ.  ಅಲ್ಲದೇ  ಫ್ರಾನ್ಸ್ ದೇಶದ ಚಳಿ ತಡೆಯಲಾರದೆ ಇಂಗ್ಲೆಂಡ್ ನಲ್ಲಿ ಹಲವಾರು ತಿಂಗಳು ಕಳೆದು ೧೯೧೫ರಲ್ಲಿ ಭಾರತಕ್ಕೆ ಹಿಂತಿರುಗಿದ.  

ರಣಜಿ ೧೯೨೦ರಲ್ಲಿ ಕ್ರಿಕೆಟ್‍ನಿಂದ ನಿವೃತ್ತನಾದ.  ಸ್ನೇಹಿತರ ಜೊತೆಯಲ್ಲಿ ಬೇಟೆಗೆ ಹೋದಾಗ ಆದ ಅಪಘಾತದಿಂದ ಒಂದು ಕಣ್ಣು ಕಳೆದುಕೊಡಿದ್ದೂ ಒಂದು ಕಾರಣ.  ರಣಜಿ  ಕ್ರಿಕೆಟ್ ಆಡಿದ ಅವಧಿಯಲ್ಲಿ  ಒಟ್ಟು ೨೪೬೯೨ ರನ್ನುಗಳನ್ನು ಗಳಿಸಿದ, ಸರಾವರಿ ಮೊತ್ತ (batting  average) ೫೬.೩೭ರೊಂದಿಗೆ.  ಬಹಳ ವರ್ಷದ ನಂತರ ಸರ್ ಜೆಫ್ರಿ ಬಾಯ್ಕಾಟ್ ಈ ದಾಖಲೆಯನ್ನು ಮುರಿದರು (ಸರಾಸರಿ ೫೬.೮೩!)
 
ರಣಜಿಗೆ ತನ್ನಂತೆ ಇರುವ ಇತರ ರಾಜಮನೆತನದವರ ಹಿತಾಸಕ್ತಿಗಳನ್ನು ಬೆಂಬಲಿವುದು ಮಾತ್ರ ಗುರಿಯಾಗಿತ್ತು, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಏನೂ ಆಸಕ್ತಿ ಇರಲಿಲ್ಲ.  ದೇಶದಲ್ಲಿ ಕ್ರಿಕೆಟ್ ಆಡುವುದಕ್ಕೆ ಇವನಿಂದ ಯಾರಿಗೂ ಉತ್ತೇಜನ ಸಿಗಲಿಲ್ಲ.  ಇವನ ಜೀವನ ಚರಿತ್ರೆ ಬರೆದ ಸೈಮನ್ ವಾಲ್ಡ್ ಅಭಿಪ್ರಾಯದಲ್ಲಿ ರಣಜಿಯ ಮನಸ್ಸು ನವಾನಗರದ  ಬದಲು ಇಂಗ್ಲೆಂಡ್ ಮೇಲಿತ್ತು,  (.. "he was more at home in England with his friends").  ಮಾಹೀರ್ ಬೋಸ್  ಬರೆದಿರುವ History of Indian cricket ಪುಸ್ತಕದಲ್ಲಿ, ರಣಜಿ ಭಾರತದ ಕ್ರಿಕೆಟ್ ಪಿತಾಮಹ ಅನ್ನುವುದು ಮೂರ್ಖತನ ಎಂದು ಟೀಕಿಸಿದ್ದಾರೆ. 

ರಣಜಿ ಜೀವನದಲ್ಲಿ ಬಹು ಭಾಗ,  ಕ್ರಿಕೆಟ್ ಆಡುವುದು ಮತ್ತು ಸಾಲಗಾರರಿಂದ ತಪ್ಪಿಸಿಕೊಳ್ಳುವುದು ಇದರಲ್ಲೇ ಕಳೆಯಿತು ಅಂದರೆ ತಪ್ಪಲಾಗರದು.  ಕೊನೆ ಕೊನೆಗೆ ಇವನಿಗೂ ಮತ್ತು ಬ್ರಿಟಿಷ್ ಅಧಿಕಾರಿಗಳಿಗೂ ಅನೇಕ ಭಿನ್ನಾಭಿಪ್ರಾಯಗಳಿದ್ದವು. 
ಇವನಿಗೆ ಮದುವೆ ಆದ ಯಾವ ದಾಖಲೆಗಳಿಲ್ಲ; ಆದರೆ ಇವನ ಹತ್ತಿರ ಸಂಬಂಧದವರ ಮಕ್ಕಳು ಇವನ ಆಶ್ರಯದಲ್ಲೇ ಬೆಳದರು.  ಅವರಲ್ಲೊಬ್ಬ ದುಲೀಪ್ ಸಿಂಹಜಿ ರಣಜಿಯ ಹಾಗೆ ಇಂಗ್ಲೆಂಡ್ ದೇಶದ ತಂಡದೊಂದಿಗೆ ಕ್ರಿಕೆಟ್ ಆಡಿದ.
 
0೨/೦೪/೧೯೩೩ ರಂದು ರಣಜಿ ಹೃದಯಾಘಾತದಿಂದ ನಿಧನನಾದ.  ರಣಜಿ ಟ್ರೋಫಿಯಿಂದ ಇವನ ಹೆಸರು ಇನ್ನೂ ಉಳಿದಿದೆಯಾದರೂ, ರಣಜಿತ್ ಸಿಂಹನಿಂದ ಆ ಕಾಲದಲ್ಲಿ ಭಾರತದಲ್ಲಿ ಕ್ರಿಕೆಟ್ ಅಭಿವೃದ್ಧಿಯೇನೂ ಆಗಲಿಲ್ಲ. 

- ರಾಮಮೂರ್ತಿ 
ಕಾಂಗಲ್ಟನ್, ಚೆಶೈರ್ 

Further reading:
•	Simon Wilde: Ranji, The strange Genius 
•	Mohir Bose: History of Indian cricket 
•	Wisden Cricketer's Almanack 

Photos: Wikimedia Commons

***********************************************************************************

ಮಾಯಾಲೋಕಗಳು

ಅಜ್ಜಿ ಕಥೆ

ನನ್ನ ಮೊಮ್ಮಕ್ಕಳು ರಜಾ ಬಂದಾಗ ನಮ್ಮ ಮನೆಗೆ ಬರುತ್ತಾರೆ. ಬಂದಾಗ ಅಜ್ಜಿ ಕತೆ ಹೇಳು ಅಂತ ಕೇಳುತ್ತಾರೆ. ಆಯಿತು. ಕೇಳಿ. ಇದು ನಡೆದ ಸಮಾಚಾರ. ಸುಮಾರು 100 ವರ್ಷ ಕಿಂತ ಮುಂಚೆ ನಡೆದ ಕಥೆ. ನನಗೆ ನನ್ನ ಅಮ್ಮ ಹೇಳಿದ್ದು. ಏನಪ್ಪಾ ಅಂದರೆ ನಾವು ಮೂಲತ: ಮಹಾರಾಷ್ಟ್ರದವರು. ಮಾದ್ವ ಬ್ರಾಹ್ಮಣರು. ವಿಪರೀತ ಮಡಿ, ಮೈಲಿಗೆ ಗಲಾಟೆ. ಮನೆಯ ಹೆಂಗಸರು ತುಂಬಾ ಜೋರು. ಆ ಕಾಲದಲ್ಲಿ ಕಚ್ಚೆ ಹಾಕಿಕೊಂಡು ಕುದರೆ ಸವಾರಿ ಮಾಡುತ್ತಿದ್ದರಂತೆ  ಅವರು ಪೂನಾ ಹತ್ತಿರ ಒಂದು ಊರಲ್ಲಿ ಇದ್ದರಂತೆ. ಪೇಶ್ವೆಗಳ ಹತ್ತಿರ ಸಿಪಾಯಿ ಗಳಾಗಿ ಇದ್ದರಂತೆ. ಇವರಿಗೆ ಮೈಸೂರಿನಲ್ಲಿ ನೆಂಟರು ಮದುವೆಗೆ ಬರಬೇಕೆಂದು ಕರೆದರಂತೆ. ಆ ಕಾಲದಲ್ಲಿ ಸಂಚಾರ ಮಾಡುವುದು ಬಹಳ ಕಷ್ಟ. ಕುದರೆಮೇಲೆ ಕಾಡಿನ ದಾರಿಯಲ್ಲಿ ಹೋಗಬೇಕು. ಚಿಕ್ಕ ಚಿಕ್ಕ ಹಳ್ಳಿಗಳಲ್ಲಿ ರಾತ್ರಿ ಇರಬೇಕು. ಸಾಮಾನ್ಯವಾಗಿ ಮರಾಟಿಗ ಹೆಂಗಸರು ಗಟ್ಟಿಗರು, ಸರಿ ಅಂತ ಪ್ರಯಾಣಕ್ಕೆ ಎಲ್ಲ ಸಿದ್ದಮಾಡಿಕೊಂಡು ಗಂಡ ಮತ್ತು ಹೆಂಡತಿ ಎರಡು ಕುದರೆ ಮೇಲೆ ಹೊರಟರಂತೆ. ಸುಮಾರು ದಿನಗಳು ಕಳೆದವು. ಎಷ್ಟೂ ಕಾಡು, ಮೆಡು ಗಲ್ಲಿ ಸುತ್ತಿ, ನಾನಾ ತರಹದ, ಕಷ್ಟ ಅನುಭವಿಸಿದರು. ಹುಲಿ, ಸಿಂಹ, ಹಾವು, ಜಿಂಕೆ ನಾನಾ ತರಹದ ಪ್ರಾಣಿಗಳನ್ನು ನೋಡಿದರಂತೆ. ಅವರ ಹತ್ತಿರ ಬಂದೂಕು ಇತ್ತು. ಒಂದು ಸಲ ಅವರ ಹತ್ತಿರ ಇದ್ದ ತಿಂಡಿ ಸಾಮಾನು ಮುಗಿದುಹೋಯ್ಯಂತೆ. ಕಾಡಿನಲ್ಲಿ ಏನು ಮಾಡುವುದು ಅಂತ, ಜೇನು, ಹಣ್ಣು ಸಿಗುತ್ತಾ ಅಂತ ನೋಡುತ್ತಾ ಇದ್ದರಂತೆ. ಒಂದು ಬಂಡೆ ಮೇಲೆ ದೊಡ್ಡ ಮುದ್ದೆ ಕಾಣಿಸಿತು. ಹೋಗಿ ನೋಡಿದರೆ ಬೇಲದ ಹಣ್ಣು, ಜೇನುತುಪ್ಪ ಕಲಿಸಿ,ಇತ್ತಂತ್ತೆ. ಇವರು ಹಸಿವೆಯನ್ನು ತಡಯಲಾರದೆ ತಿಂದರಂತೆ. ಅಷ್ಟರಲ್ಲಿ ಒಂದು ಕರಡಿ, ತನ್ನ ಮಕ್ಕಳಲಂದಿಗೆ ಬರುತ್ತಾ ಇದ್ದಿದ್ದನ್ನು ನೋಡಿ, ಇಬ್ಬರು, ಕುದರೆಮೇಲೆ ಹತ್ತಿ ಓಡಿಹೋಗಿ ಜೀವ ಉಳಿಸಿಕೊಂಡರು.  ಕರಡಿ ಪಾಪ!ತನ್ನ ಮಕ್ಕಳಿಗೆ  ತಯಾರಿಸಿದ ಬೆಲದ ಹಣ್ಣು ಜೇನು ತುಪ್ಪದ ಫಲಾಹಾರ,ನಮ್ಮ ನೆಂಟರು ತಿಂದುಬಿಟ್ಟರು. ಕರಡಿ ಅಟ್ಟಿಸಿಕೊಂಡು, ಬರುವವಷ್ಟ್ರಲ್ಲಿ, ಇವರು ಕುದರೆಮೇಲೆ ದೌಡಾಯಿಸಿದರು.
ಹೀಗೆ ನಮ್ಮ ಅಮ್ಮ ನಮಗೆಲ್ಲ ಬೆಳದಿಂಗಳ ಊಟ ಕೈ ತುತ್ತು ಹಾಕುತ್ತ ಹೇಳುತ್ತಿದರು.

'ಅಜ್ಜಿ ಇದು ನಿಜವಾದ ಘಟನೆನಾ ಅಥವಾ ಬರಿ ಕಥೆನಾ?' ' ನನ್ನ ತಾಯಿಯ ಮುತ್ತಜ್ಜಿ,ಮುತ್ತಜ್ಜ ಪೂನಾದಿಂದ ಮೈಸೂರಿಗೆ ವಲಸೆಬಂದದ್ಫು ನಿಜ. ಕುದುರೆ ಮೇಲೆ ಕಾಡಿನಲ್ಲಿ ಬಂದಿದ್ಫು ನಿಜ. ಮಿಕ್ಕಿದೆಲ್ಲ ನನಗೆ ಗೊತ್ತಿಲ್ಲ' ಅಂತ ಜಾರಿಕೊಂಡೆ. ಇಲ್ಲದಿದ್ದರೆ Where is the proof? ಅಂದರೆ ಏನು ಮಾಡಲಿ? ನಾವೆಲ್ಲ ನಮ್ಮ ಅಮ್ಮ ಹೇಳಿದ ಕಥೆ 200% ನಂಬುತ್ತೀವಿ. ಒಂದು ಜನರೇಶನ್ ಗೆ ಮುಂದಿನ ಜನರೇಶನ್ ಕತೆ ಇನ್ನು ಜೀವಂತ ವಾಗಿದೆ.

~ ವತ್ಸಲಾ ರಾಮಮೂರ್ತಿ

ಜಾಹೀರಾತುಗಳ ಮಾಯಾಲೋಕ

ಇದೀಗ ಇಲ್ಲಿ  ಸಂಜೆಗಳೇ ಇಲ್ಲದ  ಬರೀ ಬೆಳಗು – ರಾತ್ರಿಗಳ ನವೆಂಬರ್. ಚಳಿರಾಯ ನಿಧಾನವಾಗಿ ತನ್ನ ಪಾದವೂರುವ  ಸನ್ನಾಹದಲ್ಲಿದ್ದಾನೆ.  ಚಕ್ಕುಲಿ- ಕರಚಿಕಾಯಿ, ದೇಸಿ ಘೀ ಯ ಬೇಸನ್ ಉಂಡಿಗಳ ದೀಷಾವಳಿ ಫರಾಳದ  ಪ್ರಭಾವವೋ ಅಥವಾ ಚಳಿರಾಯನ ಕರಾಮತ್ತೋ ಅಂತೂ ಸಣ್ಣನೆಯ ಕೆಮ್ಮು, ಗಂಟಲ ಕೆರೆತ,  ಮೈಕೈ ನೋವು...ಹೀಂಗ  ಒಂದೊಂದೇ ಕಿರಿಕರಿಗಳು ,ಕಾಡಲಿಕ್ಕೆ ಶುರುವಾಗೂ ದಿನಗಳಿವು. 

‘ ಗಲೇಂ ಮೆ ಖರಾಶ್ ಮಜೇದಾರ್ ಸ್ಟೆಪ್ಸಿಲ್ಸ’ , ‘ ವಿಕ್ಸ್ ಕೀ ಗೋಲಿ ಲೋ ಖಿಚ್ ಖಿಚ್ ದೂರ್ ಕರೋಂ ‘
ಇದೇನಿದು ಜಾಹೀರಾತು ಶುರು ಮಾಡಿದ್ರೆಲಾ ಅಂತೀರೇನು? ಹೌದ ನೋಡ್ರಿ ಈ ಜಾಹೀರಾತುಗಳ ಮಹಿಮಾ ಮತ್ತ ಮಾಯಾ ( ಮುನ್ನಾಭಾಯಿಗತೆ ಯೆ ಮಹಿಮಾ ಔರ್ ಮಾಯಾ ಕೌನ್ ಹೈ ಅಂತ ಮಾತ್ರ ಕೇಳಬ್ಯಾಡ್ರಿ ಮತ್ತ) ಭಾಳ ದೊಡ್ಡದು ಬಿಡ್ರಿ. ಖರೇ ಹೇಳಬೇಕಂದ್ರ ಈ ಇಂಟರ್ ನೆಟ್ , ಗೂಗಲ್ ಮಹಾಶಯ ಸಹಾಯಕ್ಕಿಲ್ಲ ದ ನಮ್ಮ ಆಗಿನ ದಿನಗಳಲ್ಲಿ ನಮಗೇನರೇ ಅಲ್ಪ-ಸ್ವಲ್ಪ ಲೋಕಜ್ಞಾನ, ಸಾಮಾನ್ಯ ಜ್ಞಾನ ಇತ್ತು ಅಂದ್ರ ಅದರಾಗ ಈ ಜಾಹೀರಾತುಗಳದೇ ದೊಡ್ಡ ಪಾತ್ರ ಅಂತ ನಿಸ್ಸಂಶ ಯವಾಗಿ ಹೇಳಬಲ್ಲೆ.
ಡಮಡಮು ಅಂತ ಬಾರಸಕೋತ ಮಂಗ್ಯಾ ಆಡಸಂವಾ ಬಂದ್ರ, ‘ಮನ ಡೋಲೆ ಮೋರಾ ತನ್ ಡೋಲೆ’ ಅಂತ ಪುಂಗಿ ಊದೋ ಹಾವಾಡಿಗನ ಆ ಬಿದಿರನ ಬುಟ್ಟಿ ಕಂಡ್ರ, ಬಾರಕೋಲಿನ ಚಾಟಿ ಮೈಮೇಲೆ ಬೀಸಕೋತ ‘ ನೀರ ಹಾಕ್ರಿ, ನೀರ ಹಾಕ್ರಿ’ ಅಂತ ದುರಗಮುರಗ್ಯಾ ಬಂದ್ರ , ಆನೆಯೋ- ಒಂಟೆಯೋ ಸವಾರಿಗಾಗಿ ಬಂದ್ರ, ಯಾರೋ ಕೌಲೆತ್ತು ತಂದ್ರ, ಆಕಾಶದಾಗೊಂದು ವಿಮಾನ ಹಾರಿದ್ರ ಮನೆಯೊಳಗಿಂದ ಹೊರಗೆ ಓಡೋಡಿ ಬಂದು ಜಗತ್ತಿನ ಅದ್ಭುತಗಳೆಲ್ಲ ಅಲ್ಲೇ ಮೇಳೈಸಿಬಿಟ್ಟಾವೇನೋ ಅನ್ನೂಹಂಗ ಬೆರಗುಗಣ್ಣಿಂದ ನೋಡುತ್ತ ಅವನ್ನೆಲ್ಲ ಆಸ್ವಾದಿಸುವ ಮುಗ್ಧ ಬಾಲ್ಯ – ಹದಿಹರೆಯಗಳವು. ಹೊಸತಾಗಿ ಆಗಷ್ಟೇ ಅವರಿವರ ಮನೆಯಲ್ಲಿ ಸಣ್ಣದಾಗಿ ಒಂದೊಂದೇ Black & white, portable T.V.ಗಳು ಬರಲು ಶುರುವಾಗಿದ್ದ ದಿನಗಳು. ಖರೇ ಹೇಳಬೇಕಂದ್ರ ಆಗ ಈ ಟಿ ವಿ ವೈಯಕ್ತಿಕ ಸ್ವತ್ತಾಗಿರಲಿಲ್ಲ. ಮನೆಯವರು ದುಡ್ಡನ್ನು ಪಾವತಿಸಿ T.V ತಂದರೂ ಅದರ ಮೇಲೆ ಇಡಿಯ ಓಣಿಯ ಜನರ ಅಧಿಕಾರವಿರುತ್ತಿತ್ತು. ಈಗಿನವರಿಗೆ ಇದು ನಂಬಲಸಾಧ್ಯವಾದರೂ ನಮ್ಮ ಕಾಲದ ಸೋಳಾಣೆ ಸತ್ಯ,ಶಂಬರ್ ಟಕ್ಕೆ ಖರೇ ಮಾತಾಗಿತ್ತು ಇದು.

ನಮ್ಮ ಓಣ್ಯಾಗ ಮೊದಲ ಉಕ್ಕಲಿ ಮಾಮಾ ಅವರ ಮನಿಗೆ ಟಿ.ವಿ. ಬಂದಿತ್ತು. ಅವರ ಮನೆಯ ಮೂರುಜನ ನಮ್ಮ ಮನೆಯ ಆರು ಜನ ಅದನ್ನು ನೋಡಲು ಕೂಡುವುದಿತ್ತು. ಆ ಟಿ.ವಿ. ಕಾರ್ಯಕ್ರಮಗಳಿಗೆ ತಕ್ಕಹಂಗ ಅವರು ತಮ್ಮ ಊಟ, ತಿನಸು ,ಛಾ ಮುಗಸಕೊಂಡು ಎಷ್ಟೋ ಸಲ ನಮಗೂ ಕೊಟ್ಟು ನಮ್ಮನ್ನೆಲ್ಲ ಕುರ್ಚಿ, ದಿವಾನದ ಮೇಲೆ ಕೂಡಿಸಿ ಪಾಪ ಅವರೇ ಕೆಳಗೆ ಚಾಪೆ ಮ್ಯಾಲೆ ಕೂಡೋ ಪಾಳಿ ಬರತಿತ್ತು. ಆದ್ರ ಮಜಾ ಅಂದ್ರ ಇವುಗಳ ಬಗ್ಗೆ ಅವರಿಗೂ ಬೇಸರವಿರಲಿಲ್ಲ. ಉಲ್ಟಾ ಎಂದರೇs ಒಮ್ಮೆ ನಾವು ಹೋಗದಿದ್ರ ಅವರ ಮಗಳು ರೇಖಾ ಕಟ್ಟಿ ಮ್ಯಾಲೆ ನಿಂತು ‘ ಚಿತ್ರಹಾರ್ ಶುರು ಆತು ಲಗೂನೇ ಬರ್ರಿ’ ಅಂತ ಕೂಗಿ ಕರೆಯುತ್ತಿದ್ದಳು. ರಾತ್ರಿ ಹೊತ್ತು ಪ್ರಸಾರವಾಗುತ್ತಿದ್ದ ‘ ಕಿಲ್ಲೆ ಕಾ ರಹಸ್ಯ’ ನೋಡಲು ಅವರು ನಿದ್ದೆ ಬಂದಿದ್ದರೂ ತೂಕಡಿಸುತ್ತ ನಮಗಾಗಿ ಕಾಯುತ್ತಿದ್ದದು ನನಗೀಗಲೂ ನೆನಪಿದೆ.

84 ರಲ್ಲಿ ನಮ್ಭ ಪ್ರಧಾನಿ ಇಂದಿರಾಗಾಂಧಿಯವರ ಹತ್ಯೆಯಾದಾಗಲಂತೂ ನಮ್ಮ ಹಿಂದಿನ ಓಣಿಯ ಗುನ್ನಾಳಕರ ಅವರು ತಮ್ಮ ಟಿ.ವಿ.ಯನ್ನು ಮನೆ ಯ ಅಂಗಳದಲ್ಲಿಟ್ಟು ನೂರಾರು ಮಂದಿಗೆ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದರು. ಕ್ರಿಕೆಟ್ ಮ್ಯಾಚ್ ಗಳು ಇದ್ದರೂ ಅಷ್ಟೇ. ಪಡಸಾಲೆಯ ಟಿ.ವಿ. ಅಂಗಳಕ್ಕೇ ಬರುತ್ತಿತ್ತು.

ನಂತರ ಗೌಡರ್ ಅವರ ಮನಿಗೆ ಕಲರ್ ಟಿ.ವಿ. ಬಂದು ನಾವು ಐದು ಜನ ಮಕ್ಕಳು, ಅವರ ಮನೆಯ ಆರು ಜನ ಮಕ್ಕಳು ತಮ್ಮ ತಮ್ಮ ಸ್ನೇಹಿತರಾದಿಯಾಗಿ ಬಂಧುಬಳಗ ಸಮೇತವಾಗಿ ಸತ್ಯನಾರಾಯಣ ಪೂಜೆಯಷ್ಟೇ ಶ್ರದ್ಧೆಯಿಂದ ರಮಾನಂದ ಸಾಗರರ ರಾಮಾಯಣ, ಬಿ.ಆರ್. ಛೋಪ್ರಾರ ಮಹಾಭಾರತ ನೋಡುತ್ತಿದ್ದೆವೆನ್ನುವುದು ಬಹಳ ಸುಂದರ ನೆನಪು. ಗೌಡರ್ ಮಾಲಾಕಾಕು ಅಂತೂ ಸ್ನಾನ ಮಾಡಿ ಒಗೆದ ಬಟ್ಟೆ ತೊಡದೇ ಹೋದ್ರ ರಾಮಾಯಣ – ಮಹಾಭಾರತ ನೋಡಲಿಕ್ಕೆ ಎಂಟ್ರಿ ಪಾಸ್ ನೇ ಕೊಡತಿದ್ದಿಲ್ಲ. ಹಿಂಗಾಗಿ ನಾವು ರಾಮ- ಸೀತಾನ ಬಗ್ಗೆ ಭಯಭಕ್ತಿ ಇರದಿದ್ರ ಅಷ್ಟೇ ಹೋತು ಮಾಲಾಕಾಕುಗ ಅಂಜಿ ರವಿವಾರ ಇದ್ರೂ ಲಗೂಲಗೂ ಸ್ನಾನ – ಹೆರಳು,ಎಲ್ಲಾ ಮುಗಿಸಿಕೊಂಡು ಲಕಾಲಕಾ ತಯಾರಾಗಿ ಬಿಡತಿದ್ವಿ ಅನ್ರಿ.

ಈಗ ಮನ್ಯಾಗ 65, 75 ಇಂಚಿನ ಟಿ.ವಿ., ಹೋಮ್ ಥೇಟರ್ ಅಂತ ಸುಟ್ಟುಸುಡುಗಾಡು ನೂರಾ ಎಂಟು ಇದ್ರೂ ಆಗಿನ ಮಜಾ ಇಲ್ಲ ಅನ್ನೂದು ನನ್ನೊಬ್ಬಳ ಅನಿಸಿಕೆನೋ ಅಥವಾ ನಿಮ್ಮದೂ ಹೌದೋ ನನಗೆ ‘ ಗೊತ್ತಿಲ್ಲ.

ಹೀಂಗ ಈ ಟಿ.ವಿ. ಬಂದಮ್ಯಾಲೆ ಜಾಹೀರಾತುಗಳ ಒಂದು ಸುಂದರ ಪ್ರಪಂಚ ನಮ್ಮ ಕಣ್ಣೆದುರು ತೆರೆದುಕೊಂಡುಬಿಟ್ಟಿತು. 5-10 ಪೈಸೆಯ ಪೆಪ್ಪರ್ ಮಿಂಟೋ, ಕಿಸ್ ಮಿ ಚಾಕಲೇಟುಗಳಿಗಷ್ಟೇ ಪರಿಚಿತರಾಗಿದ್ದ ನಮಗೆ ‘ ಕಿತನಾ ಮಜಾ ಆಯೇರೆ ದುನಿಯಾ ಡೇರಿ ಮಿಲ್ಕ್ ಕಿ ಬನ್ ಜಾಯೇರೆ’ ಅಂತ ಚಾಕಲೇಟಿನಂಥ ಹೊಸ ಜಗತ್ತನ್ನು ತೋರಿಸಿದ್ದೇ ಈ ಜಾಹೀರಾತುಗಳು. ‘ಕುಛ್ ಬಾತ್ ಹೈಂ ಹಮ್ ಸಭೀಮೆಂ..ಖಾಸ್ ಹೈಂ..ಕುಛ್ ಸ್ವಾದ್ ಹೈಂ..ಕ್ಯಾ ಸ್ವಾದ್ ಹೈಂ ಜಿಂದಗಿ ಮೆಂ’ ಅಂತ ಶುರುವಾಗೋ ಡೇರಿ ಮಿಲ್ಕ್ ನ ಜಾಹೀರಾತು ನಮ್ಮ ಬದುಕಿನಾಗೂ ಸ್ವಾದ ತುಂಬಿ ಖಾಸ್ ಆದ್ವು ಇದರ ಎಲ್ಲಾ ಜಾಹೀರಾತುಗಳೂ ಒಂದೊಂದೂ ಸುಂದರ..ಒಂದೊಂದೂ ಹೃದಯಸ್ಪರ್ಶಿ. ಅವುಗಳನ್ನು ತಯಾರಿಸಿದವರ ಸೃಜನಶೀಲತೆಗೆ ನನ್ನ ಶರಣು.

‘ ಆಡು ಮುಟ್ಟದ ಸೊಪ್ಪಿಲ್ಲ’ ಅನ್ನೂಹಂಗ ಈ ಜಾಹೀರಾತುಗಳು ಕೈಯಾಡಿಸದ ಕ್ಷೇತ್ರಗಳೇ ಇಲ್ ಅನ್ನಬಹುದು. ಆಗಷ್ಟೇ ಹುಟ್ಟಿದ ಮಗುವಿನ ಪಿಂಕೂ ಗ್ರೈಪ್ ವಾಟರ್ ನಿಂದ ಹಿಡಿದು ನಿಮ್ಮ ಮಕ್ಕಳ ಎತ್ತರ, ತೂಕಗಳಿಗಾಗಿ ಕೋಂಪ್ಲಾನ್ – ಹಾರ್ಲಿಕ್ಸ್ ಗಳವರೆಗೆ, ಸ್ವಾದ್ ಭರೆ ಶಕ್ತಿಭರೆ ಪಾರ್ಲೆ ಜಿ ಯ ಜೊತೆಗೆ ನಾವು ಯಾವ ಚಹಾ ಕುಡಿಯಬೇಕು, ಯಾವ ಹಪ್ಪಳ ತಿನ್ನಬೇಕು, ನಲ್ಲನ ಮನ ಗೆಲ್ಲಲು ಅಡುಗೆಗೆ ಯಾವ ಮಸಾಲೆ ಉಪಯೋಗಿಸಬೇಕು, ಬಿರಿಯಾನಿ ರುಚಿಯಾಗಲು ಯಾವ ಅಕ್ಕಿ ಹಾಕಬೇಕು ? ಬೆನ್ನು – ಸೊಂಟ- ಹಲ್ಲು ನೋವುಗಳಿಗೆ ಏನು ಮಾಡಬೇಕು? ಯಾವ ಸೋಪ್, ಕ್ರೀಂ, ಪೌಡರ್ ನಿಂದ ನಾವು ಚಿರ ಯೌವನಿಗರಾಗಬಹುದು? ಯಾವ ಶಾಂಪೂ, ಹೇರ್ ಆಯಿಲ್ ಗಳಿಂದ ನಾವು ನಾಗವೇಣಿಯರಾಗಬಹುದು? ಯಾವ ಶೇವಿಂಗ್ ಕ್ರೀಂ, ಡಿಯೊಡ್ರಂಟ್ ಗಳನ್ನು ಬಳಸಿದ್ರ ಹುಡುಗಿಯರು ಮೈಮೇಲೆ ಬಂದು ಬೀಳಬಹುದು? ಏನು ಮಾಡಿದರೆ ಮನೆಯ ಪೀಠೋಪಕರಣಗಳನ್ನು ಆಜೀವಪರ್ಯಂತ ಮುರಿಯದಂತೆ ಇಟ್ಟುಕೊಳ್ಳಬಹುದು? ಯಾವ ಗಾಡಿ, ಬೈಕು ತಗೊಂಡ್ರ ಎಷ್ಟೆಷ್ಟು ಮೈಲೇಜು, ಏನೇನು ಲಾಭ? ಯಾವ ಚಪ್ಪಲಿ, ಶೂಸ್ ಬಳಸಬೇಕು? ಯಾವ ಒಳ ಉಡುಪುಗಳನ್ನು ಧರಿಸಬೇಕು? ಯಾವ ಪೆನ್ನು- ಪೆನ್ಸಿಲ್ – ನೋಟ್ ಬುಕ್ ಗಳನ್ನು ಉಪಯೋಗಿಸಿದ್ರ ಛಂದನೆಯ – ದುಂಡನೆಯ ಅಕ್ಷರ ಬರೆದು ವಿದ್ಯಾವಂತರಾಗಬಹುದು? ಕೊಳೆಯಾದ ಬಟ್ಟೆಗಳನ್ನು ಹೆಂಗ ಕೊಕ್ಕರೆಯಂತೆ ಬಿಳಿ ಶುಭ್ರ ಮಾಡಬಹುದು .ಇತ್ಯಾದಿ ಅಮೂಲ್ಯ – ಅತ್ಯಮೂಲ್ಯ ವಿಚಾರಗಳನ್ನೆಲ್ಲ ನಮ್ಮ ತಿಳಿವಿಗೆ ತುರುಕಿದ್ದೇ ಈ ಜಾಹೀರಾತುಗಳಂದ್ಲ ತಪ್ಪಿಲ್ಲ.
ಇನ್ನು ಕೆಲವೊಂದು ಜಾಹೀರಾತುಗಳಂತೂ ನಮ್ಮ ನೆಚ್ಚಿನ ನಟ- ನಟಿಯರ ಸಲುವಾಗಿ ಫೇವರಿಟ್. ‘ಲಿಮ್ಕಾ..ಲಿಮ್ಕಾ’ ಎಂದು ಹಾಡುವ , ಲಖಾನಿ ಹವಾಯಿ ಚಪ್ಪಲ್ ಹಾಕಿಕೊಂಡು ಕುಣಿಯುವ ಸಲ್ಮಾನ್ ಖಾನ್ ಇರಲಿ, ‘ ಡಾಬರ್ ಆಮ್ಲಾ ಕೇಶ್ ತೈಲ್’ ಅಂತ ಕಪ್ಪನೆಯ ಕೇಶರಾಶಿಯನ್ನು ಹಾರಿಸುತ್ತ ತಿರುಗುವ ಜಯಪ್ರದಾ ಇರಲಿ, ಬಾರಾತಿಯೋಂ ಕಾ ಸ್ವಾಗತವನ್ನು ಪಾನ್ ಪರಾಗ್ ಪಾನ್ ಮಸಾಲಾದಿಂದ ಮಾಡುವ ಶಮ್ಮಿಕಪೂರ್, ಅಶೋಕ ಕುಮಾರ್ ಇರಲಿ, ‘ what an Idea sir ji’ ಎನ್ನುವ ಅಭಿಷೇಕ್ ಬಚ್ಚನ್ ಇರಲಿ, Dr.fixit ನ ಅಮಿತಾಭ್ ಬಚ್ಚನ್ ಇರಲಿ, ತೀರ ಇತ್ತೀಚಿನ cleethorpes max fresh ನ ರಣವೀರ ಸಿಂಗ್ ಇರಲಿ, ಮಧುಬಾಲಾನಿಂದ ಹಿಡಿದು ಮಾಧುರಿ ದೀಕ್ಷಿತವರೆಗಿನ Lux ಸೋಪಿನ ರೂಪದರ್ಶಿಯರಿರಲಿ ಎಲ್ಲರೂ..ಎಲ್ಲವೂ ನಮ್ಮ ಫೇವರಿಟ್. ಯಾಕಂದ್ರ ನಮಗ ಬಾಲಿವುಡ್ ತಾರಾಮಣಿಗಳಂದ್ರ ಅದೇನೋ ಹುಚ್ಚು ಸೆಳೆತ – ಪ್ರೀತಿ – ಅಪನಾಪನ್. ಇನ್ನ ಅವರು ಮಾಡಿದ ads ಅಂದ್ರ ಮುಗದೇ ಹೋತ. ಅಲ್ಲೇನ್ರಿ?

ಅಲ್ರೀ ಎಲ್ಲಾಬಿಟ್ಟು ಯಕ:ಶ್ಚಿತ್ ಉಪ್ಪಿನ ಬಗ್ಗೆನೂ ಎಷ್ಟೆಲ್ಲ ಜಾಹೀರಾತುಗಳ್ರಿ..ಅದ್ಯಾಕ ಯಕ:ಶ್ಚಿತ್ ಬಿಡ್ರಿ ಇದರ ಮಹತ್ವ ಏನು ಕಡಿಮೆದ? ಇದರ ಸಲುವಾಗಿ ದಂಡಿ ಸತ್ಯಾಗ್ರಹನೇ ನಡದು ಇತಿಹಾಸದಾಗೂ ಅದಕ್ಕೊಂದು ಸ್ಥಾನ ಸಿಕ್ಕೇಬಿಟ್ಟದ. ಟಾಟಾ ನಮಕ್ ದೇಶ್ ಕಾ ನಮಕ್- ಅದರಾಗ ಶುದ್ಧತೆ, ಅಯೋಡಿನ್ ಗಳಂತೂ ಅವನೇ ಅವ ಜೋಡಿಗೆ ಚುಟಕಿ ಭರ್ ಇಮಾನದಾರಿನೂ ಅದರಾಗಿರತದ ಅನ್ನೂದು ad ನೋಡೇ ಗೊತ್ತಾಗಿದ್ದು. ‘ ಡರ್ ಕೆ ಆಗೇ ಜೀತ್ ಹೈ’ ಎಂಬ ಅಮೂಲ್ಯ ವಿಚಾರ ತಿಳಿದದ್ದೂ ಈ ಜಾಹೀರಾತಿನಿಂದಲೇ.

ಇನ್ನ ನಾವು ನಮ್ಮ ರೆಡ್ ಲೇಬಲ್ ಟೀ ಯಿಂದ Taj ಗೆ ಪಕ್ಷಾಂತರ ಮಾಡಿದ್ದಕ್ಕೂ ಈ ಜಾಹೀರಾತೇ ಕಾರಣ. ಉದ್ದನೆಯ ಗುಂಗುರು ಕೂದಲು ಹಾರಿಸುತ್ತ, ಬೆರಳುಗಳಿಂದ ತಬಲಾದ ಮೇಲೆ ನಾದದ ನರ್ತನ ಮಾಡುತ್ತ ಉಸ್ತಾದ್ ಝಾಕೀರ್ ಹುಸೇನ್ ‘ ವಾಹ್ ತಾಜ್ ಬೋಲಿಯೆ’ ಅಂತ ಸೇಳಿದ ಮ್ಯಾಲೆ ನಮಗೆ ಬ್ಯಾರೆ ಹಾದೀನೇ ಇದ್ದಿದ್ದಿಲ್ಲ ಬಿಡ್ರಿ.

‘ ದೋ ಮಿನಿಟ್’ ನ ಮ್ಯಾಗಿ ನನ್ನ ಮಕ್ಕಳ ಪ್ರೀತಿಯ ಭೋಜನ. ನನಗೂ ಅವಸರದ ಆಪ್ತಬಂಧು. ಪುಳಿಯೋಗರೆ, ಪಾವ್ ಭಾಜಿ ಮಸಾಲೆಗಳು , ಖರ್ರಂ ಖುರ್ರಂನ ಲಿಜ್ಜತ್ ಪಾಪಡ್ ಗಳು ನಮ್ಮ ಅಡುಗೆ ಮನೆಗೆ ಆಪ್ತವಾದದ್ದು ಜಾಹೀರಾತುಗಳ ಕಮಾಯಿನೇ.ಹಾಲು ಬೇಡವೆಂದ ಮಕ್ಕಳಿಗೆ compla, horlicks ಗಳ ಆಮಿಷವೊಡ್ಡಿ ಕುಡಿಸಿ ‘ಮೈ ಬಢ ರಹಾ ಹೂಂ ಮಮ್ಮಿ’ ಅಂತ ಅವರ ಪರವಾಗೆ ನಾನೇ ಅಂದುಕೊಂಡು ಖುಷಿಪಟ್ಟದ್ದು, ಬ್ಯಾಸಗ್ಯಾಗ ರಸನಾ, ಆಟ ಆಡಿ ಬಂದಕೂಡಲೇ glucon-D, ಥಂಡ್ಯಾಗ ಚ್ಯವನ್ ಪ್ರಾಶ್ ಹೀಂಗ ಮಕ್ಕಳ ಆರೋಗ್ಯದ ದೇಖರೇಕಿ ಬಗ್ಗೆ ಅತ್ಯಪರೂಪದ ಮಾರ್ಗದರ್ಶಿಗಳಾಗಿದ್ದವು.
ಈ ಮೈ ತೊಳೆವ ಸಾಬಾಣಿನ (soap) ಜಾಹೀರಾತುಗಳಂತೂ ನನ್ನ ಚಿತ್ತದಾಗ ಪಟ್ಟಾಗಿ ಕೂತಬಿಟ್ಟಾವ ಲಾ..ಲಲಾ..ಲ..ಲಾ ಅಂತ ಹಾಡಕೋತ ಸ್ವಚ್ಛ ಶುಭ್ರವಾದ ನದಿ- ಜಲಪಾತದಾಗ Liril soap ಹಿಡಿದು ಸ್ನಾನ ಮಾಡೋ ಆ ರೂಪದರ್ಶಿನ್ಶ ನೋಡಿದ್ರ ಬಚ್ಚಲಿನಾಗೇ ಹತ್ತು ಸಲ ನಮ್ಮ ಕೈಯಿಂದ ಜಾರಿ ಜಾರಿ ಬೀಳುತ್ತಿದ್ದ ಸೋಪ್ ನೆನೆಸಿಕೊಂಡು , ಇಂಥ,ಹರಿವ ನೀರಿನ ರಭಸದಾಗೊ,ಅದ್ಹೆಂಗಿನ್ನೂ ಜಾರದs ಅಕಿನ ಕೈಯಾಗೇ ಉಳದದ ಅನ್ಶೂದೇ ಸೋಜಿಗ ಅನಸತಿತ್ಯು ನನಗೆ. ಇನ್ನ ಹೊಸಬಟ್ಟಿ, ಬಿಳಿಬಟ್ಟಿ ಕೆಸರು ಮಾಡಿಕೊಂಡು ಬಂದ್ರ ಮಕ್ಕಳಿಗೆ ಬಯ್ಯದ s ‘ ದಾಗ್ ಅಚ್ಛಾ ಹೈ...surf excell hai na? ಅನ್ನುವ ನಗುಮೊಗದ ಅಮ್ಮಂದಿರೂ ನನಗ ಬ್ಯಾರೆ ಲೋಕದವರ ಹಂಗೇ ಕಾಣಸತಾರ. ಯಾಕಂದ್ರ ಸಣ್ಣವರಿದ್ದಾಗ ಹೊಸ ಬಟ್ಟೆ, ಬಿಳಿ ಬಟ್ಟೆ ಕಲೆ ಮಾಡಿಕೊಂಡ್ರ ಮಸ್ತ್ ಮಂಗಳಾರತಿ ಮಾಡಿಸಕೋತಿದ್ವಿ ಮನ್ಯಾಗ. ಈಗ ನಾನೂ ಮಕ್ಕಳಿಗೆ ಮಂಗಳಾರತಿ ಮಾಡದಿದ್ರೂ ‘ ಸ್ವಲ್ಪ ನೋಡಕೊಂಡು ಸಾವಕಾಶ ಮಾಡಲಿಕ್ಕೆ ಬರಂಗಿಲ್ಲ s?’ ಅಂತ ಅನ್ನಬಹುದೇ ಹೊರತು ‘ ದಾಗ್ ಅಚ್ಛಾ ಹೈ’ ಅನ್ನುವ ಸಹನಶೀಲತಾ ನನ್ನ ಹತ್ರ ಇಲ್ಲ.

ಒಟ್ಟಿನಾಗ ನನಗ ಈ ಜಾಹೀರಾತುಗಳ ತಯಾರಿಕೆ, ಹಣಹೂಡಿಕೆ, ಗಳಿಕೆ, ತಂತ್ರಜ್ಞಾನ ಇತ್ಯಾದಿಗಳ ಬಗ್ಗೆ ಅಷ್ಟೆಲ್ಲ ಜ್ಞಾನ ಇರದಿದ್ರೂ ಅವು ಕೊಡುವ ಮುದದ ಬಗ್ಗೆ ಬಹಳ ಖುಷಿ ಅನಸತದ. ಇವುಗಳ ಸತ್ಯಾಸತ್ಯತೆಗಳೇನೇ ಇರಲಿ ಸೆಕೆಂಡುಗಳ, ನಿಮಿಷಗಳ ಅತ್ಯಲ್ಪ ಅವಧಿಯಲ್ಲೇ ಅವುಗಳನ್ನು ಹೃದ್ಯವಾಗಿ ಪ್ರಸ್ತುತ ಪಡಿಸುವ ರೀತಿ ಇದೆಯಲ್ಲ ಅದು ನನ್ನನ್ನು ತಟ್ಟುತ್ತದೆ. ಕಿವಿ ಗುಳು ಗಳು ಅನ್ನುವಾಗ ಇಯರ್ ಬಡ್ ಹಾಕಿಕೊಂಡು ಗಲಗಲ ಮಾಡಿ ಪ್ರಪಂಚವನ್ನೇ ಒಂದು ಕ್ಷಣ ಮರೆತಂತೆ, ಕೈಗೆ ತಾಗದ ಬೆನ್ನಿಗೆ ತುರಿಕೆಯಿದಾಗ ಹಣಿಗೆಯೊಂದರಿಂದ ಅದನ್ನು ಕೆರೆದುಕೊಂಡಾಗ ಸಿಗುವ ಸುಖದಂತೆ, ಗಂಟಲಲ್ಲೇ ಅಡಗಿ ಕಾಡಿಸಿದ ಶೀನೊಂದು ‘ಆಕ್ಶೀ’ ಎಂದು ಪಟ್ಟನೇ ಹೊರಬಂದಾಗ ಸಿಗುವ ಸಮಾಧಾನದಂತೆ, ಒತ್ತಿ ಬರುತ್ತಿರುವ ತೂಕಡಿಕೆಗೊಂದು ಹೆಗಲು ದೊರೆತಾಗಿನ ನೆಮ್ಮದಿಯಂತೆ ಈ ಜಾಹೀರಾತುಗಳೂ ಕೂಡ ನಂಗ ಏನೋ ಒಂಥರಾ ಅನಿರ್ವಚನೀಯ ಅಂತಾರಲ್ಲ ಅಂಥ ಖುಷಿ, ಭರವಸೆ, ನೆಮ್ಮದಿ, ಉತ್ಸಾಹಗಳನ್ನು ಕೊಡತಾವ.

ಇದನ್ನೋದಿ ಒಂದೆರಡು ನಿಮ್ಮ ಫೇವರಿಟ್ ಜಾಹೀರಾತು ನಿಮಗ ನೆನಪಾದ್ರ, ಮನಸ್ಸು ಜರ್ ಅಂತ ಹಿಂಬರಿಕಿ ಜಾರಿಹೋದ್ರ ಅದನ್ನ ನಂಗೂ ಹೇಳೂದ ಮರೀಬ್ಯಾಡ್ರಿ.

~ ಗೌರಿಪ್ರಸನ್ನ