ಅನಿವಾಸಿ ಭಾರತೀಯ ವೈದ್ಯ ಕವಿಗೋಷ್ಠಿ – ಭಾಗ 1; ಆಯ್ದ ಕವನಗಳು

ಪ್ರಿಯರೇ, ನಮಸ್ಕಾರ. ಹೊಸವರ್ಷದ ಶುಭಾಶಯಗಳು (ನನ್ನಿಂದ). ಹೋದ ವಾರ ಭಾರತೀಯ ವೈದ್ಯ ಸಂಘದ ಕರ್ನಾಟಕ ಶಾಖೆಯ ವತಿಯಿಂದ ಆಯೋಜಿತವಾದ ಅನಿವಾಸಿ ಭಾರತೀಯ ಕವಿಗೋಷ್ಠಿ ನಡೆಯಿತು. ಇದರಲ್ಲಿ ಹಲವಾರು ಭಾರತೀಯ ಮೂಲದ ಕವಿ-ಕವಯತ್ರಿಯರು ತಮ್ಮ ಕವನಗಳನ್ನು ಓದಿದರು.  ಅಮೇರಿಕಾ, ಇಂಗ್ಲಂಡ್ ಮತ್ತು ಕತಾರ್ ದೇಶವಾಸಿಗಳಾಗಿರುವ ಕವಿಗಳ ಕವನಗಳು ವಿವಿಧ ವಿಷಯಗಳ ಮೇಲಿದ್ದು,  ಅವುಗಳ ಕನ್ಸ್ಟ್ರಕ್ಷನ್, ಭಾಷೆ, ಪದಲಾಲಿತ್ಯ ಆಕರ್ಷಕವಾಗಿದ್ದವು. ಇಂಗ್ಲಂಡಿನ ಕವಿಗಳ ಪರಿಚಯ ಅನಿವಾಸಿ ಗುಂಪಿನ ಮೂಲಕ ನನಗೆ ಇದೆ, ಡಾ. ಜಯಕೀರ್ತಿ ರಂಗಯ್ಯ ಅವರನ್ನು ಹೊರತುಪಡಿಸಿ.  ಕೊನೆಯಲ್ಲಿ ಗೋಷ್ಟಿಯ ಅಧ್ಯಕ್ಷತೆ ವಹಿಸಿದ್ದ ಅಮೆರಿಕದ ಡಾ. ತ್ರಿವೇಣಿ ಶ್ರೀನಿವಾಸರಾವ್ ಅವರು, ಪ್ರತಿ ಕವನದ ವಿಮರ್ಶೆ ಮಾಡಿದರು. ಡಾ. ಗಡ್ಡಿ ದಿವಾಕರ್ ಅವರು ಕಾರ್ಯಕ್ರಮವನ್ನು ಸಮಯ ತಪ್ಪದಂತೆ, ಇನ್ನೊಬ್ಬ ವೈದ್ಯಕವಯಿತ್ರಿ ಡಾ. ವೀಣಾ ಎನ್ ಸುಳ್ಯ ಅವರ ಸಹಯೋಗದಲ್ಲಿ ನಡೆಸಿಕೊಟ್ಟರು.   ಅದರಲ್ಲಿನ ಆಯ್ದ ಕವನಗಳನ್ನು ಇಂದಿನ ಬ್ಲಾಗಿನಲ್ಲಿ ಪ್ರಸ್ತುತಪಡಿಸುತ್ತಿದ್ದೇವೆ, ಆಯಾ ಕವಿಗಳ ಪರಿಚಯದೊಂದಿಗೆ. ಈ ಕಾರ್ಯಕ್ರಮದ ಹಿನ್ನೆಲೆಯನ್ನು ಬರೆದು ಕೊಟ್ಟ ಮಿತ್ರ ರಾಮಶರಣರಿಗೆ ವಂದನೆಗಳು. 
ಕವನಗಳನ್ನು ಎರಡು ಆವೃತ್ತಿಗಳಲ್ಲಿ ಭಾಗ ಮಾಡಿ ಹಾಕುತ್ತಿದ್ದೇನೆ. ಎಂದಿನಂತೆ ಓದಿ ನಿಮ್ಮ ಅನಿಸಿಕೆ ಬರೆಯುವುದು.
ಧನ್ಯವಾದಗಳೊಂದಿಗೆ – ಲಕ್ಷ್ಮಿನಾರಾಯಣ ಗುಡೂರ, ವಾರದ ಸಂಪಾದಕ.

**************************************************************

ಹಿನ್ನೆಲೆ: (ಕೃಪೆ: ಡಾ. ರಾಮಶರಣ ಲಕ್ಷ್ಮೀನಾರಾಯಣ) 
ಭಾರತೀಯ ವೈದ್ಯ ಸಂಘದ ಕರ್ನಾಟಕ ಘಟಕ ವೈದ್ಯ ಬರಹಗಾರರ ಸಮಿತಿಯನ್ನು ಸುಮಾರು ೫ ವರ್ಷಗಳ ಹಿಂದೆ ಪ್ರಾರಂಭಿಸಿತು. ಈ ಸಮಿತಿ ಹಲವಾರು ಕಾರ್ಯಕ್ರಮಗಳನ್ನು ನಡೆಸಿದೆ. ಕೋವಿಡ್ ಸಮಯದಲ್ಲಿ ವೈದ್ಯ ಕವಿ ಸಮ್ಮೇಳನವನ್ನೂ ನಡೆಸಿತ್ತು. ಎರಡು ವರ್ಷಗಳ ಹಿಂದೆ ವೈದ್ಯ ಸಂಪದ ಎಂಬ ದ್ವೈ ಮಾಸಿಕ ಪತ್ರಿಕೆಯನ್ನು ಅಂತರ್ಜಾಲದಲ್ಲಿ ಪ್ರಕಟಿಸುತ್ತಿದೆ. ಅನಿವಾಸಿಯಾ ಸದಸ್ಯರಾದ ಡಾ. ಕೇಶವ ಕುಲಕರ್ಣಿ ಈ ಸಂಚಿಕೆಯ ಮೊತ್ತ ಮೊದಲ ಅನಿವಾಸಿ ಭಾರತೀಯ ವಿಭಾಗದ ಸಂಪಾದಕರಾಗಿ ೨೦೨೨ರಲ್ಲಿ ಕಾರ್ಯನಿರ್ವಹಿಸಿದರು. ಆಗ ಅವರು ಈ ಪತ್ರಿಕೆಯ ಸಂಚಿಕೆಗಳನ್ನು ವಾಟ್ಸ್ಯಾಪ್ ಮೂಲಕ ನಮ್ಮೊಡನೆ ಹಂಚಿಕೊಂಡಿದ್ದು ನೆನಪಿರಬಹುದು. ಕನ್ನಡ ವೈದ್ಯ ಬರಹಗಾರರ ಸಮಿತಿಯ ಅಧ್ಯಕ್ಷೆ ಡಾ. ವೀಣಾ ಸುಳ್ಯ ಅನಿವಾಸಿ ವೈದ್ಯರನ್ನು ಒಟ್ಟುಗೂಡಿಸಿ ಕವಿ ಸಮ್ಮೇಳನವನ್ನು ಜಾಲ ತಾಣದಲ್ಲಿ ನಡೆಸುವ ಇಚ್ಛೆಯನ್ನು ವ್ಯಕ್ತಪಡಿಸಿದರು. ಅವರೇ, ಡಾ. ಗಡ್ಡಿ ದಿವಾಕರ್ ಅವರನ್ನು ನಿರ್ವಾಹಕರನ್ನಾಗಿ ನಿಯೋಜಿಸಿದರು. ಈಗಿನ ವೈದ್ಯ ಸಂಪದದ ಅನಿವಾಸಿ ವಿಭಾಗದ ಸಂಪಾದಕರ ಹಾಗೂ ತಮ್ಮ ಸಂಪರ್ಕ ಜಾಲದ ಮೂಲಕ ವೈದ್ಯ ಬರಹಗಾರರನ್ನು ಕಲೆ ಹಾಕಿದರು. ಒಪ್ಪಿಕೊಂಡ ಕವಿಗಳಿಂದ ಕವನಗಳನ್ನು ಪಡೆದುಕೊಂಡು, ಅಧ್ಯಕ್ಷರಾದ ಅಮೆರಿಕೆಯಲ್ಲಿ ನೆಲೆಸಿರುವ ತ್ರಿವೇಣಿ ರಾವ್ ಅವರಿಗೆ ಅವನ್ನು ತಲುಪಿಸಲಾಗಿತ್ತು. ಮೊದಲೇ ನಿಗದಿ ಪಡಿಸಿದ ದಿನಾಂಕ ಹಾಗೂ ಸಮಯಕ್ಕೆ ಸರಿಯಾಗಿ ಅಚ್ಚುಕಟ್ಟಾಗಿ ಕಾರ್ಯಕ್ರಮ ರವಿವಾರ ಮಧ್ಯಾಹ್ನ ೨:೩೦ಕ್ಕೆ ಪ್ರಾರಂಭವಾಯಿತು.

****************************

ಡಾ. ಮುರಳಿ ಹತ್ವಾರ ಅವರ ಮೂಲ ಕೋಟೇಶ್ವರ. ಬೆಳೆದ ಊರು ಬಳ್ಳಾರಿ. ಬೆಂಗಳೂರು, ಬಳ್ಳಾರಿಗಳಲ್ಲಿ ವಿದ್ಯಾಭ್ಯಾಸ ಮುಗಿಸಿದ ಮುರಳಿ, ಈಗ ಲಂಡನ್ನಿನಲ್ಲಿ ಹಾರ್ಮೋನು ವೈದ್ಯರಾಗಿ ಕಾರ್ಯನಿರತರಾಗಿದ್ದಾರೆ. ಮುರಳಿ ನಮ್ಮ ಅನಿವಾಸಿ ಬ್ಲಾಗಿನ ಓದುಗರಿಗೆ, ತಮ್ಮ ಕವನ, ಹೈಕುಗಳ ಮೂಲಕ ಈಗಾಗಲೇ ಚಿರಪರಿಚಿತರಾಗಿದ್ದಾರೆ.

ಹೆಜ್ಜೆಗಳು:

ನಿನ್ನೆ ನಡೆದ ಹೆಜ್ಜೆಗಳ ಗುರುತು
ಹಿಡಿಯಲು ಮತ್ತೆ ಮರಳುವಾಸೆ
ಅಳಿಸಿದ ಅಲೆಗಳಲ್ಲಿ ಅದನ್ನು
ಹುಡುಕುವದು ಹೇಗೆ?

ಹೆಜ್ಜೆಗಳ ದಾರಿ ಎಳೆದ ಮೋಡಗಳೆಲ್ಲ
ಮಳೆಯಾಗಿ ಮರೆಯಾಗಿವೆ
ಸುಡುವ ಬಿಸಿಲಿನ ಸೂರ್ಯ
ಸರಿದಂತೆ ಹೊರಳುವ ನೆರಳಿನ ದಿಕ್ಕು,
ನಕ್ಷತ್ರಗಳ ಬೆಳಕು ಹೇಳುವ ದಾರಿ
ತಿಳಿಯುವುದು ಹೇಗೆ?

ಎಷ್ಟು ಸದ್ದಿನ ಹೆಜ್ಜೆಗಳು!
ಒಂದು ಊರುವದರಲ್ಲಿ ಮತ್ತೊಂದು
ಬೇಗ! ಬೇಗ! ಬೇಗ!
ಮುಂದೆ ಹೋದಷ್ಟೂ ಅವಸರ,
ದಾರಿಯ ಹೂಗಳ ಪರಿಮಳವೂ ತಿಳಿಯದಷ್ಟು.
ಬೇಲಿಯ ಮುಳ್ಳುಗಳ ಕಲೆ ಮೈತುಂಬಾ.

ಯಾವ ಹೆಜ್ಜೆಯ ಜಾಡು, ಯಾವ ನೆರಳಿನ ಛಾಯೆ?
ನಿನ್ನೆಯೋ? ನಾಳೆಯೋ?
ನಂಬಿಕೆಯ ದೀವಿಗೆಯೊ? ಕಲ್ಪನೆಯ ಮಾಯೆಯೋ? ಎಲ್ಲ ಬೆಳಕೀಗ ಶೂನ್ಯ; ಮನಸು ಮುಳುಗಿದ ಗುಡ್ಡೆ.
ಹೊಸ ಉಸಿರಿನ ಹುಡುಕಾಟ
ನೀರ ದಾಟಿಸುವ ಸೇತುವೆಯ ಕಟ್ಟ ಬೇಕಿನ್ನೂ

ಕಾಲಿನಡಿ ಸರಿದ ನೀರು, ತೊಯ್ದ ಮಣ್ಣಿನ ಸ್ಪರ್ಶ
ಮೈ ಸೋಕಿದ ತಂಗಾಳಿ, ಕಣ್ತೆರೆಯೆ ಆಗಸದ ಕೆಂಪು
ಸುತ್ತ ತರತರದ ಕಂಪಿನ ಹೂಗಳು
ಉಸಿರೆಳೆದು ನಿಂತ ಮನದೊಳಗೆ ಹೊಸ ರೆಕ್ಕೆಗಳು

ಕಾಲು ಮುಟ್ಟಿದ ಅಲೆ ಕರೆದು ಹೇಳಿತು:
ಈ ಹೆಜ್ಜೆಯ ಗುರುತು ನೀನೆ ಇಟ್ಟುಕೋ.

- ಡಾ. ಮುರಳಿ ಹತ್ವಾರ್

**************************************

ಡಾ. ಜಯಕೀರ್ತಿ ರಂಗಯ್ಯ: ಹುಟ್ಟಿದ್ದು, ಬೆಳೆದಿದ್ದು: ಚಿಕ್ಕನಾಯಕನ ಹಳ್ಳಿ, ತುಮಕೂರು ಜಿಲ್ಲೆ. ಓದಿದ್ದು: ಎಂ.ಬಿ.ಬಿ.ಎಸ್ (ಬಿ.ಎಂ.ಸಿ) ಎಂ.ಡಿ. ಮೈಕ್ರೋಬಯಾಲಜಿ (ಜಿಪ್ಮರ್, ಪಾಂಡಿಚೆರಿ), ಎಫ್.ಆರ್.ಸಿ.ಪ್ಯಾಥ್ (ಯು.ಕೆ) ಕರ್ಮಸ್ಥಳ: ಎಪ್ಸಂ & ಸೇಂಟ್ ಹೆಲಿಯರ್ ಆಸ್ಪತ್ರೆ. ಲಂಡನ್

ವೀರಸನ್ಯಾಸಿಗೂಂದು ನುಡಿನಮನ

ಎಂಥ ಕಾಂತಿ, ಏನು ಶಾಂತಿ
ನಿಮ್ಮ ಕಣ್ಣ ನೋಟದಲಿ

ಕೋಟಿ ಸೂರ್ಯ ಸಮಪ್ರಭೆ
ಸಪ್ತ ಋಷಿಯ ಮೊಗದಲಿ

ಎಂಥ ಕೆಚ್ಚು, ಏನು ಶೌರ್ಯ
ನಿಮ್ಮ ಪ್ರತೀ ಮಾತಲಿ

ತಾಯಿ-ತಂದೆ, ಬಂಧ ಹರಿದೆ
ಸುಖದ ಬಾಳು, ಸಂಸಾರ ತೂರೆದೆ

ಗುರುವ ಪಡೆದು, ಕಾವಿ ತೂಟ್ಟೆ
ಜನರ ಪೂರೆವ, ಶಪಥವಿಟ್ಟೆ

ದೇಶ ಪೂರ ನಿಮ್ಮ ಹೆಜ್ಜೆ
ದೇಶದೊರಗೂ ಅದರ ಸದ್ದು

ಲೋಲುಪತೆಯ ಪರದೇಶದಲ್ಲೂ
ನಾಡ ಜನರ ಚಿಂತೆ ನಿಮಗೆ

ಅನ್ನ-ನೀರು,ನಿದ್ರೆ-ಭೋಗ ಎಲ್ಲ ತೃಣ
ಜೀವಾತ್ಮನ ಸೇವೆಯಲಿ

ಪತಂಜಲಿಯ ಮರೆತ ಮಣ್ಣಿನಲ್ಲಿ
ಯೋಗಸೂತ್ರದೊಸಬೆಳೆ

ಭಕ್ತಿ-ಕರ್ಮ, ಜ್ಞಾನಯೋಗ
ಶಕ್ತಿಯಿರೆ, ರಾಜಯೋಗ

ತಾಳ್ಮೆ, ತುಡಿತ, ಅಖಂಡ ಪ್ರೀತಿ
ನೀವು ಕೊಟ್ಟ ಮಹಾಮಂತ್ರ

ಕೀರ್ತಿ, ಕನಕ ಮೋಹ-ದಾಹ
ಜಯಿಸೊ ವಿವೇಕ ನೀಡು ತಂದೆ,
ಯುಗಪುರುಷನ ಕಂದನೇ!

- ಡಾ। ಜಯಕೀರ್ತಿ ರಂಗಯ್ಯ , ಯು.ಕೆ.

*************************************

ಡಾ. ಸವಿತಾ ಕಲ್ಯಾ: ಹುಟ್ಟಿದ್ದು, ಬೆಳೆದಿದ್ದು ಮೈಸೂರಿನಲ್ಲಿ. ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ / ಜೆಎಸ್ಎಸ್ ವೈದ್ಯಕೀಯ ಕಾಲೇಜಿನಲ್ಲಿ ಪದವಿ. ರೈಟ್ ರಾಜ್ಯ ವಿಶ್ವವಿದ್ಯಾಲಯ, ಡೇಟನ್, ಒಹಾಯೊದಲ್ಲಿ  ಆಂತರಿಕ ವೈದ್ಯಕೀಯದಲ್ಲಿ ರೆಸಿಡೆನ್ಸಿ: ಸಂಧಿವಾತಶಾಸ್ತ್ರದಲ್ಲಿ ಫೆಲೋಶಿಪ್: ವಿಸ್ಕಾನ್ಸಿನ್ ವೈದ್ಯಕೀಯ ಕಾಲೇಜು, ಮಿಲ್ವಾಕೀ . ಅರಿಜೋನಾದ ಫೀನಿಕ್ಸ್‌ನಲ್ಲಿರುವ ಕ್ರೈಟನ್ ವಿಶ್ವವಿದ್ಯಾಲಯದೊಂದಿಗೆ ಸಂಯೋಜಿತವಾಗಿರುವ ವ್ಯಾಲಿ ವೈಸ್ ಹೆಲ್ತ್‌ಕೇರ್ ಸೆಂಟರ್‌ನಲ್ಲಿ ಸಿಬ್ಬಂದಿ ಸಂಧಿವಾತಶಾಸ್ತ್ರಜ್ಞರಾಗಿದ್ದಾರೆ. ಹವ್ಯಾಸಗಳಲ್ಲಿ ಪ್ರದರ್ಶನ, ವಿಶೇಷವಾಗಿ ಕನ್ನಡದಲ್ಲಿ ಬರೆಯುವುದು ಸೇರಿವೆ. ಯೂಟ್ಯೂಬ್‌ನಲ್ಲಿ ಇವರು ಬರೆದು,ನಟಿಸಿದ  ” NRI, non respected Indian ” ಹಾಗು ಅಕ್ಕ ನಾಟಕ ಹೆಚ್ಚು ಗುರುತಿಸಲ್ಪಟ್ಟಿವೆ.

ಅರ್ಹತೆಗೆ ಪಟ್ಟ

ಜೀವನ ಚದುರಂಗದಾಟ
ರಾಜನಿಗೆ ಒಂದೇ ಚೌಕದೋಟ
ರಕ್ಷಿಸುವಳು ರಾಣಿ ಆಡಿ ಪರದಾಟ
ಆದರೂ ಕಟ್ಟುವೆವು ರಾಜನಿಗೆ ಪಟ್ಟ

ಪುಟ್ಟಿ ಹುಟ್ಟಿದರೆ ಬೇಡುವೆವು ಪುಟ್ಟ
ಪುಟ್ಟಿಗೆ ಮನೆ ತವರೆಂದು ಮಾಡುವೆವು ಮನದಟ್ಟ
ಹೊರುವಳು ಆಮನೆ ಈಮನೆ ಭಾರದ ಬೆಟ್ಟ
ಆದರೂ ಕುಲೋದ್ಧಾರಕನೆಂಬ ಬಿರುದ ಪುಟ್ಟನೇತೊಟ್ಟ

ಪುಟ್ಟಿ ಮಾತನಾಡಿದರೆ ವಾಯಾಡಿ, ನಲಿದರೆ ವಯ್ಯಾರಿ
ಕೋಪ ತೋರಿದರೆ ಬಜಾರಿ , ಬಾಯಿ ಮುಚ್ಚೆ ರಾಜಕುಮಾರಿ
ಕೆಂಡ ಕಾರಿದರೆ ಕಾಳಿ, ಅನ್ಯಾಯ ವಿರೋಧಿಸಿದರೆ ಮನೆಹಾಳಿ
ಸಹಸ್ರನಾಮದ ನಡುವೆ ಮನಬಿಚ್ಚಿ ಹೇಗೆ ಬಾಳಿಯಾಳು ಹೇಳಿ

ಪುಟ್ಟ ಹುಟ್ಟಿದ್ದಕ್ಕೆ ಜಾಣ, ಅಪ್ಪ ಅಮ್ಮಗೆ ಆಭರಣ
ಮನೆತನದ ಹೆಸರು ಮುಂದುವರೆಸುವ ರಾಮಬಾಣ
ಮಗನ ಹೆರದಿದ್ದರೆ ಕೊರಗುವರು ಇಡೀ ಕುಲವೇ ಭಣಭಣ
ಕಾಲಾನುಕಾಲದಿಂದ ಭೇದಬಗೆಯುತಿದೆ ಸಮಾಜದ ಕಣಕಣ

ಪುಟ್ಟನಂತೆಯೇ ಪುಟ್ಟಿಯೂ ದೇವರ ವರ
ಎತ್ತಾಡಿಸಿ ಪ್ರೋತ್ಸಾಹಿಸಿ ಒಂದೇ ತರ
ಇಡೀ ಕುಲಕೆ ಪುಟ್ಟಿ ನೆರಳನೀಡುವ ಮರ
ಹೊಸ ಜೀವವ ಪೋಣಿಸುವ ಮುತ್ತಿನ ಸರ

ಕಣ್ಣು ತೆರೆದು ತೀರಿಸೋಣ ಪುಟ್ಟಿಯರಿಗೆ ಮಾಡಿದ ನಷ್ಟ
ಭೇದ ತಿಳಿಯದೇ ಮಾಡಿದರು ಸಹಿಸುವುದು ಕಷ್ಟ
ಆರತಿಯೋ ಕೀರುತಿಯೋ ಅವರವರ ಇಷ್ಟ
ಇದ ಮುಂದಿನ ಪೀಳಿಗೆಗೆ ಮಾಡೋಣ ಸ್ಪಷ್ಟ

ಸಮಾನರು ಪುಟ್ಟಿ ಪುಟ್ಟ
ಕಟ್ಟೋಣ ಅರ್ಹತೆಗೆ ಪಟ್ಟ

- ಡಾ। ಸವಿತಾ ಕಲ್ಯಾ, ಯು.ಎಸ್.ಎ

***********************************

ಡಾ. ಮೀನಾ ಸುಬ್ಬರಾವ್: ಮೂಲತಃ ಕಡೂರಿನವರು. ಹುಟ್ಟಿ, ಬೆಳೆದುದೆಲ್ಲಾ  ಕಡೂರು, ನಂತರ ನ್ಯಾಶನಲ್ ಕಾಲೇಜ್ ಬೆಂಗಳೂರು ಮತ್ತು ಮೈಸೂರು ವೈದ್ಯಕೀಯ ವಿದ್ಯಾಲಯಗಳಲಿ ವ್ಯಾಸಂಗ. ಅಮೇರಿಕಾದ ಲಾಸ್ ಆಂಜಲೀಸ್ನಲ್ಲಿ ಮಕ್ಕಳ ಆರೋಗ್ಯ ಶಾಸ್ತ್ರದಲ್ಲಿ ( ಪೀಡಿಯಾಟ್ರಿಕ್ಸ್) ರೆಸಿಡೆನ್ಸಿ ಮುಗಿಸಿ ಸುಂದರವಾದ ಕ್ಯಾಲಿಫೋರ್ನಿಯಾದ ಮಧ್ಯ ಕರಾವಳಿ/ ಸ್ಟೈನ್ಬೆಕ್ ದೇಶ ಎಂದೇ ಹೆಸರಾಗಿರುವ ಮಾಂಟೆರೆ ಪ್ರದೇಶದಲ್ಲಿ ವಾಸ ಮತ್ತು ಮಕ್ಕಳ ತಜ್ಞೆಯಾಗಿ ಸೇವೆ ಸಲ್ಲಿಸುತಿದ್ದಾರೆ. ಕನ್ನಡದಲಿ ಕಥೆ, ಕವನ, ಪ್ರಬಂಧ, ಹಾಸ್ಯ ಮುಂತಾದ ರೂಪಕಗಳ ಬರೆದು ಸಂಪದ, ದಟ್ಸಕನ್ನಡ, ತನುಮನ ಬ್ಲಾಗ್ ಮುಂತಾದ ಜಾಲತಾಣಗಳಲಿ ಪ್ರಕಟಿಸಿದ್ದಾರೆ. ಸುಮಾರು ಭಕ್ತಿಗೀತೆಗಳ ರಚನೆ ಮಾಡಿ ಮೊದಲ 9 – ಹಾಡುಗಳ ಒಂದು ಆಲ್ಬಮ್ ಪುತ್ತೂರು ನರಸಿಂಹ ನಾಯಕರ ಸಂಗೀತ ಸಂಯೋಜನೆ, ಗಾಯನದಲ್ಲಿ ಧ್ವನಿ ಮುಗ್ರಿತವಾಗಿ ಪ್ರಕಟವಾಗಿದೆ. ಕನ್ನಡ ಕೂಟದ ಸಂಚಿಕೆಗಳು, ಕನ್ನಡ ಸಾಹಿತ್ಯ ರಂಗದ ( ಅಮೇರಿಕಾ) ಪುಸ್ತಕಗಳಲ್ಲೂ ಲೇಖನ, ಕಥೆಗಳು ಮತ್ತು ಇತರೆ ಬರಹಗಳು ಪ್ರಕಟವಾಗಿವೆ.

ಒಲವು!! (ದಿವ್ಯ ಅನುರಾಗ)

ಒಲಿದೆ ನೀನು ಒಂದು ಕ್ಷಣಕೆ ನನ್ನ ಬಾಳ ಪಥದಲಿ
ನಡೆದೆ ನಾನು ಅದರ ಮೇಲೆ ನನ್ನ ಬಾಳ ರಥದಲಿ!

ಸವಿನೆನಪು ಸಾಕೊಂದು ಬಾಳಿನಾ ಅರ್ಥಕೆ
ಸವಿಯುತಿರೆ ಸಾಗಿಹುದು ಬದುಕಿನಾ ಪತಾಕೆ!

ಆ ಮಧುರ ಅನುಭವವು ಅಮರವಾಗಿದೆ ಮನಕೆ
ಆ ಅಧರ ಅದರುವಿಕೆ ಅರಸುತಿದೆ ಜೀವಕೆ!

ಬರದಿರಳು ನಿದಿರೆಯು ನಿನ್ನಂದ ನೆನೆಯದೆ
ಹಗಲಿರುಳು ಸಾಗದು ಮಕರಂದ ಸವಿಯದೆ!

ಎಲ್ಲಿ ನೋಡಿದರಲ್ಲಿ ನೀ ನನ್ನ ನೋಟವಾಗಿರುವೆ
ಏನು ಮಾಡಿದರೂ ನೀ ನನ್ನ ಆಟವಾಗಿರುವೆ!

ನೀ ನಡೆಸುತಿರುವೆ ಬದುಕನು ಬರಡಾಗಿಸದೆ
ನೀ ಬಡಿಸುತಿರುವೆ ಅರಿವನು ಬರಿದಾಗಿಸದೆ!

ಮತ್ತೊಮ್ಮೆ ಬಾ ನೀನು ಭವ್ಯ ಭಾವಗಳ ಹೊತ್ತು
ಇನ್ನೊಮ್ಮೆ ಕೊಡು ನೀನು ದಿವ್ಯ ಅನುರಾಗದ ತುತ್ತು!

ನಗುತಿರು ಎಂದೆಂದೂ, ಬರಲಿ ಏನೊಂದು
ಸಾಗುತಿರು ಬಾಳಿನಲಿ ಬರಲಿ ನೂರೊಂದು

ನುಡಿದೆ ಈ ದಿವ್ಯ ವಾಣಿಯ ನೀನಂದು ಬಿಡಿಸಿ ಮನದಾಳದ ಚಂಚಲತೆಯ ಚೆಂಡು

- ಡಾ. ಮೀನಾ ಸುಬ್ಬರಾವ್.

***********************************************

ಉಫಿಜಿ ಎಂಬ ಕಲೆಯ ಉಗ್ರಾಣ – ಲಕ್ಷ್ಮೀನಾರಾಯಣ ಗುಡೂರ

ನನಗೆ ಇಟಲಿ ಹಲವಾರು ಕಾರಣಗಳಿಗೆ ಇಷ್ಟ. ಆ ದೇಶಕ್ಕೂ, ಭಾರತಕ್ಕೂ ಇರುವ ಸಾಮ್ಯತೆಗಳು ಒಂದು ಮುಖ್ಯ ಕಾರಣ. ಉಳಿದೆಲ್ಲ ಅಲ್ಲಿಂದ ಮುಂದೆ – ಉಪಕಾರಣಗಳು ಅನ್ನಬಹುದು. ಅಲ್ಲಿನ ಪುರಾಣಕಥೆಗಳು, ಕಲೆ, ಕಟ್ಟಡಗಳು, ಇತಿಹಾಸ, ದೇವರ ಜಾಗಗಳು, ಜನರ ಸಾಮಾಜಿಕ ಜೀವನ, ಊಟ-ತಿಂಡಿಗಳ ಬಗೆಗಿನ ಉತ್ಸಾಹ … ಹೀಗೆ ಪಟ್ಟಿ ಮುಂದುವರಿಯುತ್ತದೆ.   

ಹೀಗೆಯೇ ಪ್ರಯಾಣದಲ್ಲಿ ಒಮ್ಮೆ ಸಿಕ್ಕ ಕರ್ನಾಟಕ ಮೂಲದ ಇಟಲಿಯ ನಿವಾಸಿಯೊಬ್ಬರು ನನಗೆ ಹೇಳಿದಂತೆ, ಅಲ್ಲೂ ಭಾರತೀಯರಂತೆಯೇ 6ಕ್ಕೆ ಬರುವೆನೆಂದು ಹೇಳಿ 8ಕ್ಕೆ ಹೋಗಬಹುದು, ಹೇಳದೆಯೆ ನಿಮ್ಮ ಮಿತ್ರನನ್ನು ಅವರ ಮನೆಗೆ ಔತಣಕ್ಕೆ ಕರೆದೊಯ್ಯಬಹುದು! ಬ್ರಿಟಿಶರ ಜೀವನಕ್ರಮಕ್ಕೆ ಹೊಂದಿಕೊಂಡಿರುವ ನಾನು ಹಾಗೇನೂ ಮಾಡಿಲ್ಲವೆನ್ನಿ.  

ಚಿತ್ರಕಲೆ ಹಾಗೂ ಛಾಯಾಗ್ರಹಣದಲ್ಲಿ ಆಸಕ್ತಿಯಿರುವ ನನಗೆ ಎಷ್ಟು ಬಾರಿ ಬೇಕಾದರೂ ಹೋಗಿ ಅಲ್ಲಿನ ಸ್ಥಳಗಳನ್ನು, ಅದರಲ್ಲೂ ಗ್ಯಾಲರಿಯಾಗಳನ್ನು (museum) ನೋಡಲು ಬೇಜಾರಾಗದು.

ಅಲ್ಲಿ ಯಾವ ಊರಿಗೆ ಹೋದರೂ, ಮೇಲೆ ಹೇಳಿದ ಪಟ್ಟಿಯ ಹೆಚ್ಚು ಕಡಿಮೆ ಎಲ್ಲಾ ಅಂಶಗಳೂ ನೋಡಲು ಸಿಗುತ್ತವೆ.  ಈ ಬಾರಿ (ಎರಡನೇ ಬಾರಿ, ಮೊದಲೊಮ್ಮೆ ಯಾವುದೋ ಕೋರ್ಸಿಗೆ ಹೋಗಿದ್ದೆ – ಲೇ.) ಕುಟುಂಬಸಹಿತನಾಗಿ ಫ್ಲಾರೆನ್ಸ್ ನೋಡಲು ಹೋಗಿದ್ದೆ. ಮೊದಲ ಸಲ ಹೋದಾಗ ಮೈಕೆಲೇಂಜಲೋ ಕೆತ್ತಿರುವ ವಿಶ್ವವಿಖ್ಯಾತ ಡೇವಿಡ್ ಮೂರ್ತಿಯಿರುವ ಅಕಾದೆಮಿಯಾ ಗ್ಯಾಲರಿಗೆ ಹೋಗಿ ಆಗಿತ್ತು. ಹೀಗಾಗಿ, ಈ ಬಾರಿ ಹೋದಾಗ ಮನೆಯವರನ್ನೆಲ್ಲ ಅಲ್ಲಿಗೆ ಕಳಿಸಿ, ಇನ್ನೊಂದು ದೊಡ್ಡ ಗ್ಯಾಲರಿಯಾ ಆದ ಉಫಿಜಿ (Uffizi Galleria) ವಸ್ತುಸಂಗ್ರಹಾಲಯಕ್ಕೆ ನಾನೊಬ್ಬನೇ – ನನ್ನ ಕ್ಯಾಮರಾದೊಂದಿಗೆ – ಹೋದೆ. ಈ ಲೇಖನ ಅದರ ಬಗ್ಗೆ ಮಾತ್ರ.

ಆರ್ನೊ ನದಿಯ ದಂಡೆಯ ಮೇಲಿರುವ ಮಹಾನ್ ಕಟ್ಟಡಗಳ ಸಂಕುಲವೇ ಈಗಿನ ಉಫಿಜಿ ಸಂಗ್ರಹಾಲಯ.  ಇದು 16ನೆಯ ಶತಮಾನದ ಇಟಲಿಯ ವಾಸ್ತುಶಿಲ್ಪ ನೈಪುಣ್ಯದ ಉತ್ತಮ ಉದಾಹರಣೆ ಅನ್ನಬಹುದು.  
ಉಫಿಜಿಯ ಇತಿಹಾಸ:  
1550ರ ಇಸವಿಯಲ್ಲಿ ಫ್ಲಾರೆನ್ಸ್ ನಗರದ ಡ್ಯೂಕ್ ಆಗಿದ್ದ ಕಾಸಿಮೊ I ಡಿ’ಮೆಡಿಚಿ, ಹಂಚಿ ಹೋಗಿದ್ದ ನಗರದ ನ್ಯಾಯಾಲಯಗಳನ್ನೆಲ್ಲ ಒಂದೇ ಕಚೇರಿಯ ಆವರಣಕ್ಕೆ ತರಲೆಂದು, ಆಗಿನ ವಾಸ್ತುಶಿಲ್ಪಿ ಜಿಯಾರ್ಜಿಯೋ ವಸಾರಿಯ ಉಸ್ತುವಾರಿಯಲ್ಲಿ ಕಟ್ಟಿಸಿದ Office ಅಥವಾ Uffici / Uffizi ಕಟ್ಟಡಗಳೇ ಇವು. ದೊಡ್ಡ ದೊಡ್ಡ ಕಿಟಕಿಗಳ ನೈಸರ್ಗಿಕ ಗಾಳಿ-ಬೆಳಕಿನ ಅಗಲವಾದ ಆವಾರಗಳು ಇಲ್ಲಿಯ ವೈಶಿಷ್ಟ್ಯ. ಇದರ ನಿರ್ಮಾಣ modular ಆಗಿದ್ದು, ಅಗತ್ಯಕ್ಕೆ ತಕ್ಕಂತೆ ಹೆಚ್ಚಿನ ಕೊಠಡಿಗಳನ್ನು ನಿರ್ಮಿಸಬಹುದಾದ future-proofing ಇಲ್ಲಿದೆ.  ಈ ಕಟ್ಟಡ ಇಂಗ್ಲಿಷಿನ U ಆಕಾರದಲ್ಲಿದ್ದು, ಪೂರ್ವ ಮತ್ತು ಪಶ್ಚಿಮ ಭಾಗಗಳು ಮಾತ್ರ ನೆಲದ ಮೇಲಿವೆ. ನದಿಯಂಚಿನಲ್ಲಿ ಇರುವ ಇವೆರಡನ್ನೂ ಜೋಡಿಸುವ, U ಅಕ್ಷರದ ಬುಡದ ಭಾಗ ಮೇಲಿನ ಅಂತಸ್ತುಗಳಿಗೆ ಮಾತ್ರವೇ ಸೀಮಿತವಾಗಿದೆ, ಅಲ್ಲದೇ ಎತ್ತರದ ಭಾರೀ ಕಂಬಗಳ ಮೇಲೆ ಕಟ್ಟಲಾಗಿದೆ. ಮಧ್ಯದ ತೆರೆದ ಅಂಕಣವು ಒಂದೆಡೆ ನದಿಯ ಮೇಲಿರುವ ಪುರಾತನ ಕಲ್ಲಿನ ಸೇತುವೆಯ (ಪಾಂಟೆ ವೆಕ್ಕಿಯೋ) ಮೂಲಕ ಹಸಿರು ಹೊದಿಸಿರುವ ಬೆಟ್ಟಗಳ, ತೋಟಗಳ ಕಡೆಗೆ ಹೋದರೆ, ಇನ್ನೊಂದು ತುದಿ ಫ್ಲಾರೆನ್ಸಿನ ಮುಖ್ಯ ಮಂದಿರ ಸಾಂತಾ ಮರಿಯಾ ದೆಲ್ ಫಿಯೊರೆಯ ಕಡೆಗೆ ಕರೆದೊಯ್ಯುತ್ತದೆ. ಕಟ್ಟಡದೊಳಗಿನ ಒಳಛಾವಣಿಯನ್ನು ಅಸಂಖ್ಯಾತ ಚಿತ್ರಗಳಿಂದ ಅಲಂಕರಿಸುವ ಕಾರ್ಯ 1581ರಲ್ಲಿ ಶುರುವಾಯಿತು. ಕಾಸಿಮೊ I ಡಿ’ಮೆಡಿಚಿಯ ಮರಣಾನಂತರ ಅವನ ಮಗ ಡ್ಯೂಕ್ ಫ್ರಾನ್ಸೆಸ್ಕೋ I ಮತ್ತವನ ತಮ್ಮಂದಿರು ಈ ಕಟ್ಟಡದ ಕಾರ್ಯವನ್ನು ಇನ್ನೊಬ್ಬ ವಾಸ್ತುಶಿಲ್ಪಿ ಬರ್ನಾರ್ಡೋ ಬುಆಂಟಾಲೆಂಟಿಯ ನೇತೃತ್ವದಲ್ಲಿ ಮುಗಿಸಿ, ಅದನ್ನು ಗ್ಯಾಲರಿಯಾ ಆಗಿ ಬದಲಾಯಿಸುತ್ತಾರೆ.
ತಿರುಗಿ ವರ್ತಮಾನಕ್ಕೆ:
ನಾನೊಬ್ಬನೇ ಹೋಗುವ ವಿಚಾರವಿದ್ದುದರಿಂದ, ಮುಂಚೆಯೇ ಟಿಕೆಟ್ ತೆಗೆಸಿಕೊಂಡಿದ್ದೆ, ಅಷ್ಟೇ ಅಲ್ಲ ಬೆಳಗ್ಗೆ ಬಾಗಿಲು ತೆರೆಯುತ್ತಲೆ ಒಳಕಾಲಿಡುವ ಪ್ರಯತ್ನವನ್ನೂ ಮಾಡುವವನಿದ್ದೆ.  ಅಲ್ಲಿಗೆ ಹೋದಾಗ, ಆ ರೀತಿ ವಿಚಾರ ಮಾಡಿದವ ನಾನೊಬ್ಬನೇ ಇರಲಿಕ್ಕಿಲ್ಲ ಅನ್ನುವ ಅನುಮಾನ ಗಟ್ಟಿಯಾಗಿ ಸಾಬೀತಾಯಿತು. ಆದರೂ, ಅಲ್ಲಿನ ಕಾರ್ಯಕರ್ತರ ಚಾಕಚಕ್ಯತೆಯಿಂದಾಗಿ ಐದಾರು ನಿಮಿಷದಲ್ಲಿಯೇ ಒಳಗಿದ್ದೆ. ಬೆಳಗ್ಗೆ ಬೇಗ ಎದ್ದು ಓಡಿದ್ದು ನಿಜಕ್ಕೂ ಒಳ್ಳೆಯದೇ ಆಯಿತೆನ್ನಿ, ಪ್ರಾಕಾರಗಳೆಲ್ಲ ಜನರಿಲ್ಲದೆ, ಪ್ರತಿಯೊಂದು ಮೂರ್ತಿ, ಚಿತ್ರವನ್ನು ಮನಸೋಇಚ್ಛೆ ನೋಡುವುದು ಸಾಧ್ಯವಾಯಿತು.  

ಮೂರು ಮಹಡಿಗಳ ಆರು ಪ್ರಾಕಾರಗಳು ಮತ್ತು ಅವಕ್ಕಂಟಿದ ಕೊಠಡಿಗಳಲ್ಲಿ ಸುಮಾರು 2300 ವರ್ಷಗಳ ಇತಿಹಾಸ ತುಂಬಿದೆ.  ಗ್ರೀಕರ ಮತ್ತು ರೋಮನ್ನರ ಸಂಗಮವರಿ ಕಲ್ಲಿನ ಮೂರ್ತಿಗಳು ಅಂದಿನ ಶಿಲ್ಪಿಗಳ ಕೌಶಲ್ಯವನ್ನು ಹಾಡಿಹೊಗಳುತ್ತವೆ.  ಹಾಲುಗಲ್ಲು ಮತ್ತು ಕಡುಗಪ್ಪು ಸಂಗಮವರಿ ಕಲ್ಲಿನ ಮೂರ್ತಿಗಳನ್ನು ನೋಡುತ್ತ ಗಂಟಗಟ್ಟಲೆ ಕೂಡುವವರಿದ್ದಾರೆ.  ಇವುಗಳ ಜೊತೆಯಲ್ಲೆ ಸುಮಾರು ಸಾವಿರ ವರ್ಷಗಳಿಂದ ಇತ್ತೀಚಿನ (!) ರೆನೈಸ್ಸಾನ್ಸ್ ಪ್ರಕಾರದವರೆಗಿನ ಕಲಾವಿದರ ತೈಲಚಿತ್ರಗಳಿವೆ. ಇವುಗಳಲ್ಲಿ ಬಹುಪಾಲು ಗ್ರೀಕರ, ರೋಮನ್ನರ ಪೌರಾಣಿಕ, ಐತಿಹಾಸಿಕ ಪಾತ್ರಗಳ / ವ್ಯಕ್ತಿಗಳ ಮೂರ್ತಿಗಳೇ ಹೆಚ್ಚು. ನಂತರದ ಚಿತ್ರಕಲೆಗಳಲ್ಲಿ ಬೈಬಲ್ಲಿನ ಕಥೆಗಳು ಕಂಡುಬರುತ್ತವೆ.  

ಪ್ರಾಕಾರಗಳ ಒಳತಾರಸಿಯನ್ನೆಲ್ಲ ಒಂದಿಂಚೂ ಬಿಡದಂತೆ ಪೌರಾಣಿಕ ಪಾತ್ರಗಳ ಪೇಂಟಿಂಗುಗಳ ಜೊತೆಗೆ, ಇದನ್ನು ಕಟ್ಟುವಾಗಿನ ಸಮಯದ ಮೆಡಿಚಿ ಕುಟುಂಬದ ಪ್ರಮುಖರ ಚಿತ್ರಗಳಿಂದ ತುಂಬಲಾಗಿದೆ. 

ಮೂರು ಅಂತಸ್ತುಗಳನ್ನು ಎರಡು ಬಾರಿ ಮೇಲಿಂದ ಕೆಳಗೆ, ಈ ತುದಿಯಿಂದ ಆ ತುದಿಯವರೆಗೆ ಮನಃಪೂರ್ವಕವಾಗಿ ನೋಡಿ, ಬೇಕಾದ್ದನ್ನು ಕ್ಯಾಮರಾದಲ್ಲಿ, ಫೊನಿನಲ್ಲಿ ಸೆರೆಹಿಡಿಯುತ್ತ ಓಡಾಡಿ ಮುಗಿಸಿದೆ. ಮೂರನೆಯ ಬಾರಿಯ ಸುತ್ತುವಿಕೆಯ ಸಮಯಕ್ಕೆ ಆಗಲೇ ಸಾವಿರಾರು ಜನ-ಜಾತ್ರೆ ಸೇರಿಯಾಗಿತ್ತು. ಈ ಬಾರಿ ನನಗೆ ಫೋಟೊ ತೆಗೆದುಕೊಳ್ಳುವ ಅವಸರವಿರಲಿಲ್ಲವಾಗಿ, ಸುಮ್ಮನೆ ಜನರ ಮಧ್ಯ ಓಡಾಡಿ, ಅಲ್ಲಲ್ಲಿ ಬೆಂಚಿನಮೇಲೆ ಕೂತು ನೋಡಿ ಕೆಳಗೆ ಬಂದೆ.
ಎಲ್ಲಾ ಮ್ಯೂಸಿಯಮ್ಮುಗಳಲ್ಲಿ ಇರುವಂತೆ ಅಲ್ಲಿಯೂ ಒಂದು ನೆನಪುಕಾಣಿಕೆ ಅಂಗಡಿ ಇತ್ತಲ್ಲ, ಅಲ್ಲಿಗೆ ಹೋದೆ. ಎದುರಿಗೆ ಕಲಾವಿದ ಸಾಂಡ್ರೋ ಬಾಟಿಚೆಲ್ಲಿಯ ವಿಶ್ವಪ್ರಸಿದ್ದ ವೀನಸ್ಸಳ ಹುಟ್ಟು (The Birth of Venus by Botticelli, circa 1480s) ಪೇಂಟಿಂಗಿನ ದೊಡ್ಡ ಚಿತ್ರ ಕಾಣಿಸಬೇಕೇ? ಅದನ್ನು ಹೇಗೆ ಬಿಟ್ಟೆ ಅಂದುಕೊಳ್ಳುತ್ತಾ, ಮತ್ತೆ ತಿರುಗಿ ಎರಡನೆಯ ಮಹಡಿಗೆ ಓಡಿದೆ (ಸುಳ್ಳು – ಲಿಫ್ಟಿನಲ್ಲಿ ಹೋದೆ – ಲೇ.). ಅದುವರೆಗೂ ಮುಚ್ಚಿದ್ದ ಕೊಠಡಿಯೊಂದು ಈಗ ತೆರೆದಿದ್ದು ಅದರ ಮುಂದೆ ಒಂದರವತ್ತು ಜನರ ಸಾಲಿತ್ತು. ಸರಿ, ಮತ್ತೇನು, ನೋಡದೆಯಂತೂ ಹೋಗುವಂತಿಲ್ಲವಲ್ಲ, ನಿಂತೆ. ಒಳಗೆ ಒಂದು ನೂರರಷ್ಟು ಇದ್ದ ಗುಂಪಿನ ಮಧ್ಯ ನುಗ್ಗಿಕೊಂಡು ಹೋಗಿ ಆ ಸುಮಾರು ಮೂರು ಮೀಟರ್ ಅಗಲ, ಎರಡು ಮೀಟರ್ ಎತ್ತರದ ಚಿತ್ರದ ಮುಂದೆ ನಿಂತಾಗ ಆದ ಅನುಭವ ವರ್ಣಿಸಲಾಗದು.
ಅರ್ಧ ದಿನದ, ಮೂರು-ಮತ್ತೊಂದು ಸಲದ ಓಡಾಟ ಮುಗಿಸಿ ಹೊರಬಂದು, ಅಲ್ಲಿಯೇ ಕಟ್ಟೆಯ ಮೇಲೆ ಕುಳಿತೆ – ನನ್ನ ಆ ಬೆಳಗ್ಗಿನ overwhelming ಅನುಭವದ ಮೆಲುಕು ಹಾಕುತ್ತ.

ಮಧ್ಯದ ತೆರೆದ ಅಂಕಣದಲ್ಲಿ ದಿನವೂ ಸಂಗೀತಗಾರರು ಅಮೋಘವಾಗಿ ಹಾಡುತ್ತಲೋ, ವಾದ್ಯಗಳನ್ನು ನುಡಿಸುತ್ತಲೋ ಕೇಳುಗರ ಮನತಣಿಸುತ್ತಿರುತ್ತಾರೆ. ಒಂದರ್ಧ ಗಂಟೆ ಕೂತು ಕೇಳಿ, ಅವರ ಮುಂದಿನ ವಯೋಲಿನ್ ಡಬ್ಬಿಗೊಂದಿಷ್ಟು ಕಾಣಿಕೆ (definitely worth, by any means – ಲೇ.) ಹಾಕಿ, ಮನೆಯ ಉಳಿದ ಸದಸ್ಯರನ್ನು ಹುಡುಕುತ್ತಾ ಹೊರಟೆ. ಅವರೆಲ್ಲ ಅಕಾದೆಮಿಯಾ ಗ್ಯಾಲರಿ ಮುಗಿಸಿ ಬಂದು, ಒಂದು ಪುಟ್ಟ ಜೆಲಾಟೇರಿಯಾದಲ್ಲಿ ಝಂಡಾ ಊರಿದ್ದರು. ನಾನೂ ಒಂದು ಬಟ್ಟಲು ತೊಗೊಂಡು, ಅವರೊಡನೆ ಕೂತು, ಇಟಾಲಿಯನ್ನರಂತೆ (ಅಥವಾ ಭಾರತೀಯರಂತೆ) ಕೈಗಳನ್ನು ಬೀಸಿ, ಜೋರಾಗಿ ಆಡುತ್ತಿದ್ದ ಮಾತಿನಲ್ಲಿ ಸೇರಿಕೊಂಡೆ.
ಮತ್ತೇನಾದರೂ ಫ್ಲಾರೆನ್ಸಿಗೆ ಹೋದರೆ (ಇನ್ನೂ ಸಾಕಷ್ಟು ಊರುಗಳಿವೆ ನಿಜ – ಲೇ.), ಇನ್ನೂ ಎರಡಿವೆ ಗ್ಯಾಲರಿಯಾಗಳು ನೋಡಲು!

- ಲಕ್ಷ್ಮೀನಾರಾಯಣ ಗುಡೂರ

(ವಿಸೂ: ಮೇಲೆ ಹಾಕಿರುವ ಎಲ್ಲಾ ಚಿತ್ರಗಳೂ ನಾನೇ ಸೆರೆಹಿಡಿದವು. ಜಾಗ ಹಿಡಿಯುತ್ತದೆಂದು ಕೆಲವೇ ಚಿತ್ರಗಳನ್ನು ಹಾಕಿದ್ದು, ಪ್ರತಿಯೊಂದರ ಹೆಸರು ಹಾಕುವುದನ್ನು ಕೈಬಿಟ್ಟಿದ್ದೇನೆ. ಕ್ಷಮೆಯಿರಲಿ. ಅಲ್ಲದೇ, ನನ್ನ ಚಿತ್ರಗಳು ಎದುರಿಗೆ ನೋಡಿದಾಗ ಆಗುವ ಆನಂದದ ಅನುಭವದ ಕಾಲುಭಾಗಕ್ಕೂ ನ್ಯಾಯ ಒದಗಿಸವು. – ಲೇ.)
***************************************************