ಹೀಗೊಂದು ಸಿನೆಮಾ ವಿಹಾರ, ಹಾಗೊಂದು ಹರಟೆ

ಅನಿವಾಸಿ ಬಳಗಕ್ಕೆ ನಮಸ್ಕಾರ. ಯುಗಾದಿ, ರಾಮನವಮಿ, ಹನುಮಜಯಂತಿ, ಕೋಸಂಬರಿ-ಪಾನಕ, ಮಾವು ಎಂದೆಲ್ಲ ಚೈತ್ರದ ಸಂಭ್ರಮದಲ್ಲಿ ಮಿಂದೆದ್ದಿದ್ದಾಯಿತು. ಇದೀಗ ಈಸ್ಟರ್ ನ ರಜೆಯ ದಿನಗಳು. ಬೆಳಗ್ಗೆ ಮಕ್ಕಳ ಶಾಲೆಯ ಅವಸರವಿರದ, ತಡ ರಾತ್ರಿಯ ಟಿ.ವಿ. ವೀಕ್ಷಣೆಗೆ ಸೂಕ್ತ ದಿನಗಳು. ಅದಕ್ಕೆಂದೇ ನಮ್ಮ ಅನಿವಾಸಿಯ ಹೊಸ ಬರಹಗಾರರಾದ ಪ್ರಮೋದ್ ಸಾಲಿಗ್ರಾಮ ಅವರು ನೋಡಿ ವಿಶ್ಲೇಷಿಸಿದ ಸಿನೆಮಾವೊಂದರ ಲೇಖನ ಇಂದಿನ ಸಂಚಿಕೆಯಲ್ಲಿದೆ. ನಮ್ಮಲ್ಲಿರುವ ಬಹು ಮಂದಿ ಸಿನೆಮಾಪ್ರಿಯರಿಗೆ ಇದು ಮೆಚ್ಚುಗೆಯಾದೀತೆಂಬ ಭರವಸೆಯಿದೆ. ಜೊತೆಗೆ ನನ್ನದೊಂದು ಲಘು ಹರಟೆಯೂ ಉಂಟು. ಓದಿ ಲಗೂನೆ ಒಂದೆರಡು ಕಮೆಂಟೂ ಮಾಡ್ರಿ. ಹಂಗೇ ಪ್ರಮೋದ್ ಅವರು ಹೇಳಿದ ಸಿನೆಮಾನೂ ನೋಡ್ರಿ..ಅವರ ಅನಿಸಿಕೆಗಳ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಗಳನ್ನೂ ಹಂಚಗೊಳ್ರಿ. – ಸಂಪಾದಕಿ

ನಾ ಕಂಡ ವಿಡುದಲೈ – ೧

ಬರಹಗಾರ ಜೆಯಮೋಹನ್ ರವರ ಸಣ್ಣಕಥೆ ಆಧಾರಿತ ಸಿನಿಮಾ. ಮೈನಿಂಗ್ ಹೆಸರಲ್ಲಿ ಸರ್ಕಾರವೊಂದು  ಜನರಿಗೆ ಮಣ್ಣೆರಚುತ್ತಾ : ಕ್ರಾಂತಿಕಾರಿಯೋರ್ವನನ್ನು ದೇಶದ್ರೋಹಿಯಾಗಿಸಿ ; ಪೊಲೀಸ್ ಪಡೆಯೊಂದು ಅವನ ಬೆನ್ನಟ್ಟಿರುವ ಹಿನ್ನಲೆಯಲ್ಲಿ ಈ ಚಿತ್ರ . 

ಪೊಲೀಸ್ ದೌರ್ಜನ್ಯದ ಮುನ್ನಲೆಯಲ್ಲಿ ಡ್ರಾಮಾ ರಚಿಸಿ , ಕಥಾಪಾತ್ರಗಳೆಲ್ಲ ಬಂದು ಕಥೆಗೆ ನಟಿಸಿ ಹೋಗುತ್ತಾರೆ ಅಷ್ಟೇ. ಕಥೆಯೇ ಸಿನಿಮಾದ ಜೀವಾಳ . ಇದು ನಿರ್ದೇಶಕ ವೆಟ್ರಿಮಾರನ್ ಗೆ ಹೊಸದಲ್ಲ- ಅವರ ಹಿಂದಿನ ಸಿನಿಮಾ : ವಿಸಾರಣೈ ಒಂದೊಮ್ಮೆ ನೋಡಿ ಬನ್ನಿ . ಇವರು ಪಾತ್ರಗಳ ನಿಟ್ಟಿನಲ್ಲಿ ಕಥೆ ಹೇಳುವ ಕಲೆಯನ್ನ ,ಹೇಗೆ ಕರಗತ ಮಾಡಿಕೊಂಡ್ದಿದಾರೆ ಅನ್ನೋ ಆಶ್ಚರ್ಯ ನಿಮ್ಮನ್ನ ಪಕ್ಕಾ ಕಾಡುತ್ತದೆ .  ಗುಡ್ಡುಗಾಡಿನ ಗ್ರಾಮಸ್ಥರು , ಪೋಲಿಸಿನವರು , ರಾಜಕಾರಣಿ , ಮಾಧ್ಯಮದವರು, ನಾಯಕ -ನಾಯಕಿ ಎಲ್ಲರ ಮಧ್ಯದಲ್ಲೊಂದು balancing act ನಿರ್ದೇಶಕನ ಕೈಚಳಕ . ಮೊದಲ ಹತ್ತು ನಿಮಿಷದ ರೈಲು ಆಕ್ಸಿಡೆಂಟ್ ದೃಶ್ಯದಲ್ಲೇ ದೊಡ್ಡ Long -Shot  ಮುಖಾಂತರ ಕ್ಯಾಮೆರಾ ಕಣ್ಣಲ್ಲಿ ಟ್ರೈನ್ ಕಿಟಕಿಯೊ ಳಗೆ ಹೊಕ್ಕು ಗಾಯಗಳು , ಸಾವು ನೋವು , ವೇದನೆ , ಅನುಕಂಪ , ಮನುಷ್ಯತ್ವ ಎಲ್ಲವನ್ನುತೋರಿಸುತ್ತ ಕಥೆಯಲ್ಲಿ ಮುಳಿಗಿಸಿಬಿಡುತ್ತಾರೆ . ನಂತರ ಬರುವುದೆಲ್ಲಾ Bonus.  

ದಮನಿತರ ರಕ್ಷಣೆಗೆ ನಿಂತಂತೆ ಇರುವ ಕ್ರಾಂತಿಕಾರಿ ಪೆರುಮಾಳ್ ವಾದಿಯಾರ್ (ವಿಜಯ್ ಸೇತುಪತಿ)ಗೆ ಭಾಗ ಒಂದರಲ್ಲಿ ಕಡಿಮೆ ಪಾತ್ರ ಆದರೂ ಮನಸ್ಸಿಗೆ ಹತ್ತಿರವಾಗುತ್ತಾರೆ . Climax ನಲ್ಲಿ ಬರುವ ಅವರ ಭಾಗ -೨ರ ತುಣುಕುಗಳಲ್ಲಿ powerful Dialogue ನಿಂದ ಮುಂದೇನಾಗಬಹುದು ಅನ್ನೋ ಕುತೂಹಲ.  

ಪೊಲೀಸ್ ಇಲಾಖೆಯ ಸಾಮಾನ್ಯ ಪೇದೆ ಕುಮರೇಸನ್(ಸೂರಿ) ಈ ಕಥೆಯ ಮುಖ್ಯ ಪಾತ್ರಧಾರಿ .ಈ ಮುನ್ನ ಬರೀ comedian ಆಗೇ ನಟಿಸಿದಂತ ಸೂರಿ ಅವರನ್ನ ಸಿನಿಮಾದ ಹೀರೋವನ್ನಾಗಿಸಿರುವ ನಿರ್ದೇಶಕರ ಗಟ್ಟಿ ನಿರ್ಧಾರ ಮೆಚ್ಚಬೇಕಾದಂತದ್ದು . ಕಾರಣ ಪಾತ್ರಕ್ಕೆ ಬೇಕಾದ ಮುಗ್ಧತೆ , ಅಸಹಾಯಕತೆ , ಹತಾಶೆ ಇವೆಲ್ಲದರ ಮಧ್ಯೆ ನೈತಿಕತೆಯ ಮೂರ್ತರೂಪ ಸೂರಿ . ತಾನು ತಪ್ಪು ಮಾಡದೆ ಇದ್ದಾಗ ಕ್ಷಮೆ ಕೇಳಲಿಚ್ಛಿಸದ ಛಲವಾದಿ -  ಮನಸ್ಸಿಗೆ ಹತ್ತಿರವಾಗುತ್ತಾರೆ . ನಮ್ಮ - ನಿಮ್ಮಂತೆ ವ್ಯವಸ್ಥೆಯ ಮೇಲೆ ಭರವಸೆ ಇಟ್ಟಿರುವ ಕುಮರೇಸ ವಿನಾಕಾರಣ ಪನಿಶ್ಮೆಂಟ್ ತಿನ್ನುವಾಗ ಕರುಳು ಚುರುಕ್ ಅನ್ನತ್ತೆ.  ಕುಮರೇಸ- ನಾವೇ ಏನೋ ಅನ್ನಿಸೋ ಅಷ್ಟು ಆಕ್ರಮಿಸುತ್ತಾರೆ , ಪ್ರಭಾವ ಬೀರುತ್ತಾರೆ. 

ನಾಯಕಿ ತಮಿಳರಸಿಯಾಗಿ (ಭವಾನಿ ಶ್ರೀ) ನಿಮ್ಮನ್ನು ದಿಗ್ಭ್ರಮೆಗೊಳಿಸುತ್ತಾರೆ. ಪರದೆಯ ಮೇಲಿನ ಲವ್ ಟ್ರ್ಯಾಕ್ ನಮ್ಮನ್ನು ಎಲ್ಲೂ ಬೋರ್ ಹೊಡಿಸದಂತೆ ಸಮಗ್ರವಾಗಿ ಮತ್ತು ಅದ್ಭುತವಾಗಿ ಬರೆಯಲಾಗಿದೆ.ಅದಕ್ಕೆ ಕಾರಣ ನಾಯಕಿಯ ಭಾವನಾತ್ಮಕ ಆಘಾತಗಳು , ಜನಾಂಗದ ಹಿನ್ನೆಲೆ, ಫ್ಲ್ಯಾಷ್‌ಬ್ಯಾಕ್ ಎಲ್ಲವೂ ಕಥೆಗೆ ಪೂರಕವಾಗಿರೊದು. ತುಂಬಾ ಹಿಡಿಸುವ scene ಒಂದು ನೆನಪಿಗೆ  ಬರುತ್ತಿದೆ : ಸರಿಯಾಗಿ ಸ್ಪಂದಿಸದ ಕಾರಣ ನಾಯಕಿಯ ಎದುರು ಕುಮರೇಸ ಬಂದು ಬೇಷರತ್ ಕ್ಷಮೆಯಾಚಿಸಿ , ತಪ್ಪನ್ನು ಸಮರ್ಥಿಸಿಕೊಳ್ಳದೆ , ಏನನ್ನೂ ವೈಭವೀಕರಿಸದಿರುವ scene - ತುಂಬಾ Beautiful ಹಾಗೂ Rare ಕೂಡ . 

ಕುಮರೇಸನಿಗೆ ನರಕ ತೋರಿಸುವ ವ್ಯವಸ್ಥೆಯ ರೂವಾರಿಯಾಗಿ ಪೊಲೀಸ್ ಅಧಿಕಾರಿ ಓ.ಸಿ (ಚೇತನ್). ಈತ ಚಿತ್ರದ ದೊಡ್ಡ ಅಚ್ಚರಿ. ಪೋಲೀಸರ ದೌರ್ಜನ್ಯದ ಮುಖವಾಗಿ ಮತ್ತು ಕ್ರೂರಿಯಾಗಿ ಪಾತ್ರವನ್ನು ನೆನಪಿನಲ್ಲಿರುವಂತೆ ನಟಿಸಿದ್ದಾರೆ. DSP ಯಾಗಿ ಗೌತಮ್ ವಾಸುದೇವ್ ಮೆನನ್ , Chief Secretary ಆಗಿ ರಾಜೀವ್ ಮೆನನ್ Perfect . ಸಣ್ಣ ಪೋಷಕ ಪಾತ್ರಗಳು ಕೂಡ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.   

ಹೊರಗಿನವನು ಹೇಗೆ ಒಳಗಿನವನಾಗುತ್ತಾನೆ ? ನಿರಪರಾಧಿ ಹೇಗೆ ನಿಜಾಯಿತಿ ಅರಿಯುತ್ತಾನೆ ? ಸತ್ಯದಿಂದ ದೂರವಾದ ಮಾಧ್ಯಮಗಳ ಪ್ರಚಾರ , ವ್ಯವಸ್ಥಿತ ರಾಜಕೀಯ, ಮೇಲ್ದರ್ಜೆಯವರ ದರ್ಪ - ಪೊಲೀಸರನ್ನು ಹೊಕ್ಕಿದಾಗ ಜನರಿಗಾಗುವ ಸಂಕಷ್ಟಗಳು ,ಒಳ್ಳೆಯದಾವುದು - ಕೆಟ್ಟದಾವುದು ಎಂಬ ಸಂಘರ್ಷ. ಯಾರ ಪರವಾಗಿ ಹೋರಾಡುವುದು ? ಹೀಗೆ ನಾನಾ ವಿಷಯಗಳನ್ನು ಅವರವರ ದೃಷ್ಟಿಕೋನದಲ್ಲಿ ಹೇಳಿರುವ ಕಥೆ ತೆರೆಯ ಮೇಲೆ ಸ್ಪಷ್ಠವಾಗಿ ಕಾಣಸಿಗುತ್ತದೆ . ಹಾಗಾಗಿ ನಾವು ಕೂಡ ಬರೀ ಪ್ರೇಕ್ಷಕರೆನ್ನುವುದು ಮರೆತು ಹೋಗಿ ಪಾತ್ರಗಳಾಗಿರುತ್ತೇವೆ . 

ಪೊಲೀಸ್ ದೌರ್ಜನ್ಯ, Raw ಅಂಡ್ Rustic ಆಗಿ ಮೂಡಿಬರಬೇಕು ಅಂತ ಚಿತ್ರದಲ್ಲಿ ಸಾಕಷ್ಟು Aggression, Nudity, Vulgarity ಎಲ್ಲವೂ ಇದ್ದು disturb ಆಗಿಬಿಡಬಹುದು . ಹಾಗೂ ಚಿತ್ರದಲ್ಲಿ  ಅಲ್ಲಲ್ಲಿ ಡಬ್ಬಿಂಗ್ lip Sync issues ಅನ್ನಿಸ್ತು.  

ಕ್ಯಾಮೆರಾ ವರ್ಕ್ ವೇಲರಾಜ್ , ಕಲಾ ನಿರ್ದೇಶನ  Jackie, ಎಡಿಟರ್ ರಾಮರ್  ನಿಮಗೆ ದೊಡ್ಡ ಸಲಾಂ .ಇಳಯರಾಜರ ಇಂಪಾದ ಸಂಗೀತವಿದೆ. ಹಾಡೊಂದಕ್ಕೆ ಕನ್ನಡತಿ ಅನನ್ಯ ಭಟ್ ದನಿಯಿದೆ. ಸಿನಿಮಾದ geography  - locations ಎಲ್ಲವೂ ಕಥೆಗೆ ಪೂರಕ .  ಸಿನಿಮಾನೇ ಜೀವನ ಅಂತ ಇಷ್ಟಪಡುವ ಹಲವು ಜನರ ಕೈಂಕರ್ಯದ ಫಲ ವಿಡುದಲೈ  . ಪೊಲೀಸ್ ದೌರ್ಜನ್ಯದ ದೃಶ್ಯಗಳು ಬಲು ಹಿಂಸಾತ್ಮಕ - ಸ್ವತಃ ಪೊಲೀಸ್ ಒಬ್ಬಾತನಿಗೂ ತನ್ನ ಕೆಲಸದ ಮೇಲೆ ವಿಷಾದ ಮೂಡಬಹುದು . ಆದರೂ ಸಹ ಸಮುದಾಯದ ತಳವರ್ಗ / ಬುಡಕಟ್ಟು ಜನರ ಕಷ್ಟ-ಕಾರ್ಪಣ್ಯ ಗಳಿಗೆ ಕನ್ನಡಿ . ಮನಸ್ಸು ಕರಗಿ , ನಮ್ಮನು ನಾವೇ ಅರ್ಥೈಸಿಕೊಳ್ಳಬಹುದಾದ ಪ್ರಶ್ನೆಗಳು ಮೂಡುತ್ತವೆ. ಅದಕ್ಕೆ ಏನೋ  ಈ ಸಿನೆಮಾಗೆ ವಿಡುದಲೈ ಅಂದರೆ ಬಿಡುಗಡೆ/ಸ್ವಾತಂತ್ರ್ಯ ಅನ್ನೋ ಹೆಸರು. 

Rating: ೮೫/೧೦೦

-ಪ್ರಮೋದ್ ಸಾಲಿಗ್ರಾಮ ರಾಮಕೃಷ್ಣ

ಪಂಜಾದ ಮ್ಯಾಲೊಂದು ಪ್ರಬಂಧ

ಸ್ನೇಹಿತರೇ ನಮಸ್ಕಾರ.’ಪಂಜಾನs' ಅಂತ ಒಮ್ಮಿಗಲೇ ಆವಾಕ್ಕಾಗಬ್ಯಾಡ್ರಿ.ಈ ಪಂಜಾ ಹುಲಿ-ಸಿಂಹದ ಪಂಜಾ ಅಲ್ರಿ .  ಮತ್ತ ನಮ್ಮ ಬೆಂಗಳೂರು -ಮೈಸೂರಿನ
ಪಂಚೆನೂ ಅಲ್ರಿ.ಯಾಕಂದ್ರ ಆ ಪಂಚೆಯ ಠೀವಿ  ಬ್ಯಾರೆನೇ ಇರತದ.ಕೆಂಪು-ಹಸಿರು ಬಣ್ಣದ ಎರಡು  ಬಟ್ಟಿನ ಜರದ ಅಂಚೇನು? ಬೆಳ್ಳಗ ಶುಭ್ರ ಕೊಕ್ಕರೆಯಂಥ ಅದರ ಮಿನುಗೇನು?......ಅದಲ್ಲ ತಗೀರಿ,ಇದು ನಮ್ಮ ಉತ್ತರ ಕನಾ೯ಟಕದ ಪಂಜಾsರೀ..

ಜೀವನದಾಗ ಒಂದು ಗುರಿ ಇರಬೇಕು ;ಕೆಲವೊಂದು ರೂಲ್ಸ್ ,ಕಂಡೀಷನ್ಸ ಇರಬೇಕು  ಅನ್ನೋದು ಬಲ್ಲವರ ಮಾತು.ನಮ್ಮ ಡಿ.ವಿ.ಜಿ.ಯವರಂತೂ”ಜೀವಗತಿಗೊಂದು ರೇಖಾಲೇಖವಿರಬೇಕು  ನಾವಿಕನಿಗೆ ಇರುವಂತೆ  ದಿಕ್ಕು  ದಿನವೆಣಿಸೆ’ ಅಂತ ಖಡಾಖಂಡಿತವಾಗೇ ಹೇಳಿಬಿಟ್ಟಾರ.ಆದ್ರ ನಮ್ಮ ಈ ಕೈಮಗ್ಗದ , ಖಾದಿಭಂಡಾರದ ಪಂಜಾಕ್ಕ ಇವು ಯಾವ ಮಾತೂ ಅಪ್ಲೈ
ಆಗಂಗಿಲ್ಲ.ಅದಕ್ಯಾವ ಘನಂದಾರಿ ಗೊತ್ತು ಗುರಿ ಏನೂ ಇಲ್ಲ.ಅದರಲೆ ತಲಿ ಅರೆ  ಒರಸಕೋರಿ, ಮಾರಿ ಅರೆ ಒರಸಕೋರಿ ,ಮುಸುರಿಗೈ ಅರೆ ಒರಸಕೋರಿ, ಅಳ್ಳಕ ಆಗಿದ್ದ ಹೂರಣ ಅರೆ ಸೋಸರಿ,ಅನ್ನದ ಗಂಜಿ ಬಸೀರಿ,ಶ್ರೀಖಂಡಕ್ಕ ಮಸರರೆ ಕಟ್ರಿ, ಮೊಳಕಿ ಬರಸಲಿಕ್ಕೆ ಕಾಳ ಅರೆ ಕಟ್ಟಿಡ್ರಿ, ದೇವರ ಒರಸೂ ವಸ್ತ್ರ ಮಾಡ್ರಿ,ಮಡೀಲೆ ಒಣಗಹಾಕಿ ದೇವರ ಪೂಜಾ ಅರೇ ಮಾಡ್ರಿ ..ಇಲ್ಲಾ  ಶ್ರಾದ್ಧ-ಪಕ್ಷ -ತಿಥಿ ಮಾಡ್ರಿ..  ಎಲ್ಲಾ ನಡೀತದ.ಫಲಾಫಲದ ಚಿಂತೆಯಿಲ್ಲದ ಕಮ೯ಯೋಗಿಯಂತೆ ಯಾವ ಕೆಲಸವನ್ನಾದರೂ ನಿಷ್ಠೆಯಿಂದ  ಮಾಡುವ ಹಿರಿಮೆ ಇದರದು.ನಾ ಮೊದಲೇ ಹೇಳಿದ್ಹಂಗ ಇದು ಯಾವ ನಿಯಮಗಳ ಮುಲಾಜಿಲ್ಲದ ಸವ೯ತಂತ್ರ ಸ್ವತಂತ್ರ ವಾದದ್ದು.ಅದಕ್ಕ ಯಾವದೇ ಪಂಜಾದ ಮ್ಯಾಲೂ ‘ವಾಶಿಂಗ್ ಇನ್ ಸ್ಟ್ರಕ್ಶನ್ಸ’ ಇರಂಗಿಲ್ಲ ನೋಡ್ರಿ.”only hand wash,only dry clean ,keep away from the fire,only machine wash in 40 degree ,do not iron ..ಇಂಥ ಯಾವ  ರಗಳೇನೂ ಇಲ್ಲ.ಕೈಲೇರೆ ಒಗೀರಿ,ಮಶೀನ್ ನಾಗರೆ ಹಾಕ್ರಿ,ಅಗಸರವನಿಗೇ ಕೊಡ್ರಿ...ಎಲ್ಲಾನೂ ನಡೀತದ.ಇದ್ರ ಒಂಚೂರು ನಿರಮಾನೋ,ನೀಲಿಪಾಲಿನೋ ಹಾಕಿದರೂ ನಡದೀತು! ಇಲ್ಲಂದ್ರ ಬರೀ ನೀರಲ್ಲಿ ಕೈಯಿಂದ ಕುಕ್ಕಿ ಹಾಕಿದರೂ ಆಯಿತು.ಬಿಚ್ಚಿ ಹರವಿದ್ರ ಐದು ನಿಮಿಷದಾಗ ಒಣಗೇ ಬಿಡತದ. ಇಸ್ತ್ರಿ ಪಸ್ತ್ರಿ ಮಾಡೂ ತಂಟೆನೂ  ಇಲ್ಲ.
ಇನ್ನು ಇವುಗಳ ಸೈಜೋ? ದಶಾವತಾರದ ವಾಮನನಿಂದ ಹಿಡಿದು ತ್ರಿವಿಕ್ರಮನವರೆಗೆ..ಅಂಗೈ ಅಗಲದಿಂದ ಹಿಡಿದು ನವ್ವಾರಿ ಸೀರಿಯಷ್ಟು ದೊಡ್ಡದೂ ಸಿಗತಾವ.ಕನಾ೯ಟಕ ಬಿಟ್ಟು ಸುಮಾರು ೨೫ ವಷ೯ಗಳಿಂದ ದೆಹಲಿ – ಲಂಡನ್ ಅಂತ ಎಲ್ಲೇ ಅಡ್ಡಾಡಿದರೂ ನಮ್ಮ ಮನೆಯ  ಕಪಾಟಿನಾಗ ಪಂಜಾಕ್ಕೊಂದು ಜಾಗ ರಿಸವ್೯ ಇರೂದಂತೂ ಗ್ಯಾರಂಟಿ .ನಾನು ಪ್ರತಿಸಲ ಸೂಟಿಗೆ  ಅಂತ ನನ್ನ ತವರು  ಮನಿಗೆ ಹೋದ್ರ  ಏನು ಬಿಟ್ಟರೂ ,ಬ್ಯಾರೆ ಬ್ಯಾರೆ ಸೈಜಿನ  ನಾಲ್ಕು ಪಂಜಾ ತರೂದಂತೂ ತಪ್ಪಸಂಗಿಲ್ರಿ.ಎರಕೊಂಡ ಮ್ಯಾಲೆ ಪಂಜಾದಲೆ ತಲಿ ಒರಸಿಕೊಳ್ಳುದರ ಮಜಾನೇ ಬ್ಯಾರೆ.soft ಆದ  cotton ಬಟ್ಟಿ...ಸಂಪೂಣ೯ವಾಗಿ ನೀರು ಹೀರಿಕೊಳ್ಳುವ  ಅದರ ವೈಶಿಷ್ಟ್ಯ.. ಈ  ಟರ್ಕಿ - ಪರ್ಕಿ ಒಳಗ ಆ ಮಜಾ ಇಲ್ಲ ಬಿಡ್ರಿ.
 ನಾವು ಸಣ್ಣವರಿದ್ದಾಗ ನಮ್ಮ ಸೋದರಮಾವ  ಚ್ಯಾಷ್ಟಿ ಮಾಡತಿದ್ರು...”ನೈನಂ ಛಿಂದಂತಿ ಶಸ್ತ್ರಾಣಿ  ನೈನಂ ದಹತಿ ಪಾವಕ: “ ಅಂತ ಶ್ರೀಕೃಷ್ಣಗ ಭಗವದ್ಗೀತಾ ಒಳಗ ಆತ್ಮದ ಲಕ್ಷಣ ಹೇಳೂ ಐಡಿಯಾ ನಮ್ಮ ಸುಬ್ಬಣ್ಣಾಚಾರ್ಯರ ಪಂಜಾ ನೋಡಿನೇ ಬಂದಿರಬೇಕು ಅಂತ.ಹಂಗs  ಅವಾಗಿನ ಅಂದ್ರ 60- 70 ರ ದಶಕದ ಸುಬ್ಬಣಾಚಾಯ೯ರಿಂದ ಈಗ  2022-23 ರ ನಮ್ಮ ಪವಮಾನಚಾರ್ಯರತನಕ ಇದರ ಜಾಗ ಏನೂ ಬದಲಾಗಿಲ್ಲ. ನಮ್ಮ ಪವಮಾನಾಚಾರ್ಯರು  face-book,WhatsApp  ಎಲ್ಲಾದರಾಗೂ ಇದ್ದಾರ.ಕಂಪ್ಯೂಟರ್ ನಾಗ ಕುಂಡಲಿ  ತಗೀತಾರ.ವಿಮಾನದಾಗ ಓಡಾಡತಾರ.ಆದ್ರ ಪಂಜಾದ ಜಾಗಾದಾಗ ಮಾತ್ರ ಇನ್ನೊಂದು  ಸಾಮಾನು ಬಂದಿಲ್ಲ ನೋಡ್ರಿ.ಇವುಗಳದು ತಲೆ-ತಲಾಂತರದಿಂದ ಒಂಥರಾ ‘ಏಕಮೇವ ಚಕ್ರಾಧಿಪತ್ಯ’.  ‘ಸೂಯ೯ನ ಕಾಂತಿಗೆ ಸೂಯ೯ನೇ ಸಾಟಿ  .ಹೋಲಿಸಲಾರಿಲ್ಲ.’ ಅಂದ್ಹಂಗ ಪಂಜಾದ ಹಿರಿಮೆಗೆ ಪಂಜಾನೇ ಸಾಟಿ .ಹೋಲಿಸಲಾರಿಲ್ಲ.’ಮಡಿವಾಳರ ಶತ್ರು ,ಮಠದಯ್ಯಗಳ ಮಿತ್ರ....ಲಂಗೋಟಿ ಬಲು ಒಳ್ಳೇದಣ್ಣ  - ಒಬ್ರ ಹಂಗಿಲ್ಲದೇ ಮಡಿಗೆ ಒದಗುವುದಣ್ಣ ‘ ಅಂತ ಪುರಂದರದಾಸರು ಹಾಡಿದರಲ್ಲ.....ನಾವು ಬೇಕಾದರ ಲಂಗೋಟಿಗೆ ಪಯಾ೯ಯವಾಗಿ ಪಂಜಾ ಬಳಸಿಕೊಂಡ್ರ ಏನೂ ತಪ್ಪಿಲ್ಲವೇನೋ?! ಈ ಪಂಜಾಗಳಿಗೆ ರೇಶ್ಮೆಯಂಥಾ ರೇಶ್ಮೆಯಿಂದನೂ ಕಾಂಪಿಟೇಶನ್ ಇಲ್ಲ ಬಿಡ್ರಿ.

ಬ್ರಾಹ್ಮಣರ  ಮನ್ಯಾಗ ಏನು ಇಲ್ಲಂದ್ರೂ ನಡೀತದ.ಆದ್ರ ಈ ಪಂಜಾ ಇಲ್ಲಂದ್ರ ನಡ್ಯಂಗಿಲ್ಲ ನೋಡ್ರಿ.ದೇವರ  ಪೂಜಾದ ಸಮಯಕ್ಕ ಉಪಯೋಗಿಸಿದಂಥ ಪಂಜಾನ್ನ ಆಮ್ಯಾಲೆ ಬಿಚ್ಚಿ ನೋಡಬೇಕ್ರಿ..ಅದರ ಮ್ಯಾಲೆ ಒಂದು  ಸುಂದರ ವಣ೯ಚಿತ್ರ , ಒಂದು  modern art ಆಗಿಬಿಟ್ಟಿರತದ.ಅಕ್ಷಂತಿ,ಗಂಧ,ಅರಿಶಿನ,ಕುಂಕುಮ ಎಲ್ಲದರ ಸುಂದರ ಚಿತ್ತಾರ...ಇನ್ನ ದೊಡ್ಡ  ದೊಡ್ಡ  ಸಮಾರಾಧನಿ ಅಡಿಗಿಗೆ ಪಂಜಾ ಬೇಕೇ ಬೇಕ್ರಿ.ದೊಡ್ಡ  ದೊಡ್ಡ ಪಾತೇಲಿ ಒಲಿ ಮ್ಯಾಲಿಂದ ಇಳಸಲಿಕ್ಕೆ ಒದ್ದಿ ಪಂಜಾನೇ ಬೇಕ್ರಿ.ಹಾಂ,ಮಸಾಲಿಪುಡಿ,ಖಾರಪುಡಿ ,ಅರಿಶಿನ ಪುಡಿ ಎಲ್ಲಾ ಮೆತ್ತಿದ ಅದರ ಸೌಂದರ್ಯನೇ ಬ್ಯಾರೆ. ಇಷ್ಟ ಯಾಕ್ರಿ ಸ್ವಾಮಿಗೋಳು ಮುದ್ರಾ ಹಾಕಬೇಕಂದ್ರೂ ಈ ಪಂಜಾ ಜೋಡಿಗೆ ಬರಬೇಕ್ರಿ.ಒದ್ದಿ ಪಂಜಾದ ಮ್ಯಾಲೆ ಮುದ್ರಿ ಒತ್ತಿದ ಮ್ಯಾಲೆನೇ ಅದು ನಮ್ಮ ಮೈ ಮ್ಯಾಲೆ ಮೂಡೂದರಿ.
ನಮ್ಮ ಗದಗಿನ ಕುಮಾರ ವ್ಯಾಸನ ಭಾರತಕ್ಕೂ ಇದು ತನ್ನ ಕೊಡುಗೆ ಸಲ್ಲಿಸಿದ್ದ ಗೊತ್ತಿರಬೇಕ ನಿಮಗ. ಬಾವಿ ನೀರಿನ ಸ್ನಾನಮಾಡಿ ಉಟಗೊಂಡಿದ್ದ ಒದ್ದಿ ಪಂಜಾ ಆರೂತನಾ ಕುಮಾರವ್ಯಾಸಗ ಕಾವ್ಯ ಸ್ಫೂರ್ತಿ ಇರತಿತ್ತು ಅಂತಲೂ, ಕಂಬಕ್ಕೆ ಆರಲೆಂದು ಕಟ್ಟಿದ ಪಂಜಾದ ಮ್ಯಾಲ ನಾರಾಣಪ್ಪಗ ಮಹಾಭಾರತ ಸಚಿತ್ರವಾಗಿ ಕಾಣಿಸುತ್ತಿತ್ತು ಅಂತಲೂ ದಂತಕಥೆಗಳು ಪ್ರಚಲಿತದಾಗ ಅವ. 
ಹಂಗಂತ ಇದರ ಜಾಗಾ ಬರೇ ಬಡ ಬ್ರಾಹ್ಮಣರ ಮನ್ಯಾಗ ಮತ್ತ ಮಠದಾಗಷ್ಟೇ ಅಂತ ತಿಳಕೋಬ್ಯಾಡ್ರಪಾ.ಇದು ರಗಡ ಸಲ ಬಾಲಿವುಡ್ ಸವಾರಿನೂ ಮಾಡಿ  ಬಂದದ.ನಮ್ಮ ರಾಜಕಪೂರ್ ಫ್ಯಾಮಿಲಿಯವರಿಗಂತೂ ಇದು ಫೇವರಿಟ್. ‘ ತುಝೆ ಬುಲಾಯೆ ಯೆ ಮೇರಿ ಬಾಹೇಂ...ಗಂಗಾ  ಯೆ ತೇರಿ ಹೈ ಫಿರ್ ಕೈಸಿ ದೇರಿ ಹೈ’ಅಂತಲೂ, ‘ಸತ್ಯಂ ಶಿವಂ ಸುಂದರಂ ‘ ಅಂತಲೂ ಹಾಡಿ ತಾನೂ ಕುಣಿಯೂದಲ್ಲದ ಎಲ್ಲಾರ ಮೈ-ಮನಸ್ಸನ್ನೂ ಕುಣಿಸಿ -ತಣಿಸೇದ ಅನ್ನೂದನ್ನ ಮರೀಬ್ಯಾಡ್ರಿ.
ಇಷ್ಟೆಲ್ಲಾ  ಆದ್ರೂ ಸೊಕ್ಕಿಲ್ಲ ನೋಡ್ರಿ ಅದಕ್ಕ.”ತುಂಬಿದ ಕೊಡ ತುಳಕಂಗಿಲ್ಲ “ಅನ್ನೂಹಂಗ ಸದ್ದಿರದೇ ತನ್ನ ಕತ೯ವ್ಯದಲ್ಲಿ ನಿರತವಾಗಿರತದ.ಫಲಾಫಲಾಪೇಕ್ಷೆಯಿಲ್ಲದೇ ,ಮೇಲು -ಕೀಳು ಎನ್ನದೇ ಕಮ೯ಯೋಗಿಯಂತೆ ತಾನಾಯಿತು ತನ್ನ ಕಾಯಕವಾಯಿತು ಎಂಬಂತಿರತದ.

ಮತ್ತ ಇಂಥ ಪಂಜಾಕ್ಕ  ಒಂದು ಮೆಚ್ಚುಗಿ ಮಾತ ಬರಲೆಲಾ ನಿಮ್ಮ ಕಡೆಯಿಂದ.

- ಗೌರಿ ಪ್ರಸನ್ನ

’ಡೊವ್ ಡೇಲ್ ’ ಮತ್ತು ’ಗಂಟು-ಮೂಟೆ ’-ಅರ್ಪಿತ ರಾವ್

       ಅರ್ಪಿತ ರಾವ್ ಮಗನೊಂದಿಗೆ

ಪರಿಚಯ

ಅರ್ಪಿತ  ರಾವ್  ಹುಟ್ಟಿ ಬೆಳೆದಿದ್ದು ಸೊರಬ ತಾಲೂಕಿನ ಬರಿಗೆ ಎಂಬ ಪುಟ್ಟ ಹಳ್ಳಿಯಲ್ಲಿ. ಮೊದಲಿನಿಂದ ಹಸಿರು ತುಂಬಿದ ಕಾಡು , ಧೋ ಎಂದು ಸುರಿಯುವ ಮಳೆ ನೋಡಿ ಅದೇನೋ ಕವನ ಗೀಚುವ , ಕಥೆ ಬರೆಯುವ ಹುಮ್ಮಸ್ಸು ಇದಕ್ಕೆ ಸಾಥ್ ನೀಡಿದ್ದು ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿದ್ದು ಪತ್ರಕರ್ತರಾದ  ಇವರ ಅಪ್ಪ . ಕನಸನ್ನು ನನಸಾಗಿಸಿದ್ದು ಉಜಿರೆಯ ಪತ್ರಿಕೋದ್ಯಮ ವಿಭಾಗ. ಸಂಯುಕ್ತ ಕರ್ನಾಟಕದಲ್ಲಿ ಇಂಟರ್ನ್ಶಿಪ್ , ದೂರದರ್ಶನದಲ್ಲಿ ಸ್ವಲ್ಪ ದಿನಗಳ ವೃತ್ತಿ.

ಮದುವೆಯಾಗಿ ಬಂದಿದ್ದು ಲಂಡನ್ ಗೆ್. ಕಳೆದ ೮ ವರ್ಷಗಳಿಂದ ಇಂಗ್ಲೆಂಡ್ ನಲ್ಲಿ ವಾಸ. ಆಕ್ಸಫರ್ಡ್ ನ ಬ್ಯಾನ್ಬರಿಯಲ್ಲಿ  ಪ್ರಸ್ತುತ ವಾಸ.  ವಿಜಯ ನೆಕ್ಸ್ಟ್ , ವಿಜಯಕರ್ನಾಟಕ , ಸಖಿ ಪಾಕ್ಷಿಕ ,ಉದಯವಾಣಿ, ಹೊಸದಿಗಂತ ಮುಂತಾದ ಪತ್ರಿಕೆಗಳಲ್ಲಿ ಸಾಕಷ್ಟು ಲೇಖನಗಳು ಪ್ರಕಟಗೊಂಡಿವೆ. ಬೇಸರ ಕಳೆಯಲು ಗೀಚುವ,ಕೆಲವೊಮ್ಮೆ ಪ್ರಕಟಗೊಂಡ ಲೇಖನಗಳನ್ನು  ಇವರದೇ ಸ್ವಂತ ಬ್ಲಾಗ್ http://ibbani-ibbani.blogspot.co.uk/ ಇಲ್ಲಿ ಓದಬಹುದು .  ಜಾನಪದ ಗೀತೆಗಳನ್ನು ಹಾಡುವುದು , ಹೊಸ ರುಚಿ ಮಾಡುವುದು ಹವ್ಯಾಸ . ಪ್ರಸ್ತುತ ರಿಟೇಲ್ ವಿಭಾಗದಲ್ಲಿ ಉದ್ಯಮದಲ್ಲಿರುವ ಅರ್ಪಿತ ಅನಿವಾಸಿಯಲ್ಲಿ ಹಲವು ನೆನಪುಗಳನ್ನು ಈ ಹಿಂದೆ ಹಂಚಿಕೊಂಡಿದ್ದಾರೆ. ಕಳೆದವಾರ ಹಣತೆ ಎನ್ನುವ ಅರ್ಥಪೂರ್ಣ ಕವನವನ್ನು ಬರೆದಿದ್ದರು. ಈ ವಾರ ಡೊವ್ ಡೇಲ್ ಎನ್ನುವ ಸ್ಥಳಕ್ಕೆ ಕೊಟ್ಟ ಭೇಟಿಯನ್ನೂ ಜೊತೆಗೆ ತಾವು ನೋಡಿದ ಗಂಟು-ಮೂಟೆ ಎನ್ನುವ ಬಹು ಚರ್ಚಿತ ಸಿನಿಮಾ ಬಗ್ಗೆ ವಯಕ್ತಿಕ ಅನಿಸಿಕೆ್ಗಳನ್ನು  ಹಂಚಿಕೊಂಡಿದ್ದಾರೆ- –ಸಂ


ಇಂಗ್ಲೆಂಡಿನ ಬಹುತೇಕ ಭಾಗಗಳು ವರ್ಷದ ಬೇರೆಬೇರೆ ಕಾಲಮಾನಗಳಲ್ಲಿ ವಿಭಿನ್ನ ರೀತಿಯಲ್ಲಿ ಕಾಣುತ್ತವೆ ಮತ್ತು ಅದಕ್ಕೆ ತನ್ನದೇ ಆದ ವೈಶಿಷ್ಟತೆಯನ್ನು ಕೂಡ ಹೊಂದಿರುವುದು ಕಂಡುಬರುತ್ತದೆ. ಉದಾಹರಣೆಗೆ ಬೇಸಿಗೆಯಲ್ಲಿ ಒಂದು ರೀತಿಯ ಹಸಿರಾದರೆ ಚಳಿಗಾಲದಲ್ಲಿ ಬೋಳು ಮರಗಳು ಕೆಲವೊಮ್ಮೆ ಹಿಮ ತುಂಬಿದ ಶ್ವೇತವರ್ಣವನ್ನು ಮೈತುಂಬಿಸಿಕೊಂಡಿರುವ ಪ್ರಕೃತಿಯ ಅಂದವನ್ನು ನೋಡುವುದೇ ಇನ್ನೊಂದು ಸೊಬಗು. ಹಾಗೆಯೇ ಶಿಶಿರ ಋತುವಿನಲ್ಲಿ ಹೂವಿನಿಂದ ಹಾಸಿ ಹೊದ್ದಿರುವ ಪ್ರಕೃತಿಯನ್ನು ಕಣ್ಣು ತುಂಬಿಸಿಕೊಳ್ಳುವುದು ಎಲ್ಲಕ್ಕಿಂತ ಚೆಂದ.

ಹಾಗೆಯೇ ಇನ್ನೇನು ಇಲ್ಲಿನ ವಸಂತ ಕಾಲ ಮುಗಿದು ಚಳಿಗಾಲ ಪ್ರಾರಂಭವಾಗಬೇಕು ಎನ್ನುವಾಗ  ನಾವು ಈ ಭಾರಿ ಹೋಗಿದ್ದು ಪೀಕ್ ಡಿಸ್ಟ್ರಿಕ್ಟ್ . ಹೆಸರಿಗೆ ತಕ್ಕ ಹಾಗೆ ಇಲ್ಲಿ ಎಲ್ಲಿ ನೋಡಿದರೂ ಹಸಿರು ಬೆಟ್ಟಗಳು. ಮಲೆನಾಡಿನಲ್ಲಿ ಬೆಳೆದ ನನಗೆ ಹಸಿರು ಬೆಟ್ಟಗುಡ್ಡಗಳು ಹೊಸದಲ್ಲ ಅವುಗಳ ತಪ್ಪಲಿನಲ್ಲೇ ಬೆಳೆದು ಬಂದಿದ್ದರಿಂದ ಅದೊಂದು ರೀತಿಯಲ್ಲಿ ಎಷ್ಟು ಸೋಜಿಗವೋ ಅಷ್ಟೇ ರೂಢಿ ಕೂಡ ಎನ್ನಬಹುದು. ಆದರೆ  ಇಲ್ಲಿನ ಬೆಟ್ಟಗಳ  ಸೊಗಸೇ ಬೇರೆ. ಎತ್ತರದ ದಟ್ಟ ಅರಣ್ಯಗಳ ನಡುವಿನ ಬೆಟ್ಟಗಾಡುಗಳು ಇದಲ್ಲ. ಮನುಷ್ಯ ತನ್ನ ಅನುಕೂಲಕ್ಕೆ ತಕ್ಕಂತೆ ತಾನೇ ಮಾಡಿಕೊಂಡಿದ್ದಾನೇನೋ ಎಂಬಂತಿರುತ್ತದೆ ಇಲ್ಲಿನ ಬೆಟ್ಟಗಳು.ಪೀಕ್ ಡಿಸ್ಟ್ರಿಕ್ಟ್ ನ ಯಾವುದೇ ಭಾಗಗಳಿಗೆ ಹೋದರೂ ಕೂಡ ಸಾಕಷ್ಟು ನಡೆಯುವುದು ಅಥವಾ ಬೆಟ್ಟ ಹತ್ತುವುದು ಇದ್ದೇ ಇರುತ್ತದೆ ಆದ್ದರಿಂದ ರಣ ಬಿಸಿಲಿನಲ್ಲಿ ಹೋದರೆ ಬೆಟ್ಟ ಹತ್ತುವುದು ಕಷ್ಟವಾಗಬಹುದು ಆದ್ದರಿಂದ  ಸ್ಪ್ರಿಂಗ್ ಕಾಲದಲ್ಲಿ ಹೋದರೆ ಇಲ್ಲಿನ ಪ್ರವಾಸಿ ಸ್ಥಳಗಳನ್ನು ಸಾಕಷ್ಟು ಮಜಾ  ಮಾಡಬಹುದು .

ಹಾಗೆ ಈ ಬಾರಿ ನಾವು ನೋಡಹೋಗಿದ್ದು ಪೀಕ್ ಡಿಸ್ಟ್ರಿಕ್ಟ್ ನ ಡೋವ್ ಡೇಲ್

ಡೋವ್ ಡೇಲ್ :

ಡರ್ಬಿಶೇರ್ ನಲ್ಲಿರುವ ಡೋವ್ ಡೇಲ್ ಗೆ ವರ್ಷಪೂರ್ತಿ ಸಾವಿರಾರು ಪ್ರವಾಸಿಗರು ಬರುತ್ತಾರೆ. ನಾವು ಹೋಗಿದ್ದು ಸೆಪ್ಟೆಂಬರ್ ನ ಮಧ್ಯ ಭಾಗವಾದ್ದರಿಂದ ಹದವಾದ ಚಳಿ ಜೊತೆಗೆ ಸೂರ್ಯನ ಎಳೆ ಬಿಸಿಲು ಎರಡೂ ಬೆರೆತು ಮನಸ್ಸಿಗೆ ಮುದ ನೀಡುವ ವಾತಾವರಣವಾಗಿತ್ತು . ಡೋವ್ ಡೇಲ್ ಸ್ಟೆಪ್ಪಿಂಗ್ ಸ್ಟೋನ್ ಎಂದೇ ಕರೆಯಲಾಗುವ ಈ ಪ್ರವಾಸಿ ಸ್ಥಳವನ್ನು ಡೋವ್ ಡೇಲ್ ವಾಕ್ ಎಂದು ಕೂಡ ಹೇಳುತ್ತಾರೆ.  ಇದಕ್ಕೆ ಕಾರಣ ಇಲ್ಲಿ ಹರಿಯುತ್ತಿರುವ ನದಿಯ ಮದ್ಯೆ ಕಲ್ಲನ್ನು ಇಡಲಾಗಿದ್ದು ಇಲ್ಲಿನ ಬೆಟ್ಟವನ್ನು ಹತ್ತಲು ಒಂದೊಂದೇ ಕಲ್ಲುಗಳನ್ನು ದಾಟಿ ಹೋಗಬೇಕು.
ಇಲ್ಲಿ ಹದಿನೆಂಟನೇ ಶತಮಾನದಲ್ಲಿ  ಪ್ರಾರಂಭವಾದ  ಪ್ರವಾಸೋದ್ಯಮ ಇಂದು ಯುನೈಟೆಡ್ ಕಿಂಗ್ಡಮ್  ನ ಅತ್ಯಂತ  ಜನಪ್ರಿಯ ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ. ಇಲಾಮ್ ಎಂಬ ಹಳ್ಳಿಯಲ್ಲಿ ಸುಮಾರು ೪೫ ಮೈಲಿಯವರೆಗೆ ಹರಿಯುವ ಡೋವ್ ಎಂಬ ನದಿಯ ತಟದಲ್ಲಿ ಸುಣ್ಣದ ಕಲ್ಲಿನ ಕೊರೆತಗಳಿಂದ ನಿರ್ಮಾಣವಾದ ಬೆಟ್ಟವನ್ನು ಡೋವ್ ಡೆಲ್ ವ್ಯಾಲಿ ಎಂದೇ ಕರೆಯುತ್ತಾರೆ.

ಅದೆಲ್ಲಕ್ಕಿಂತ ಇಲ್ಲಿ ಮನಸೂರೆಗೊಳ್ಳುವುದು ಡೋವ್ ನದಿಯ ಜುಳುಜುಳು ನಾದದ ಮಧ್ಯೆ  ಸ್ಟೆಪ್ಪಿಂಗ್ ಸ್ಟೋನ್ ಗಳಲ್ಲಿ ಅತ್ತ  ದಾಟಿ ಹೋದರೆ ಸುತ್ತಲೂ ಹಸಿರು ಹಾಸಿದ ಬೆಟ್ಟಗಳು ಮತ್ತು ಅದನ್ನು ನೋಡಲೆಂದೇ ಪ್ರವಾಸಿಗರೊಂದಿಗೆ ಬಂದಂತಿರುವ ಚಿನ್ನದ ಗೆರೆ ಎಳೆದಂತೆ ಕಾಣುವ ಸೂರ್ಯನ ಹದವಾದ ಕಿರಣಗಳು . ಬೆಟ್ಟದ ತುದಿಯನ್ನು ಹತ್ತಿ ನೋಡಿದರೆ ಅಲ್ಲಿನ ಚಿತ್ರಣ ಮನಸ್ಸನ್ನು ಮುದಗೊಳಿಸುವುದು ಖಂಡಿತ.

ಡರ್ವೆಂಟ್ :

ಡೋವ್ ಡೇಲ್ ನಿಂದ ಸುಮಾರು ಒಂದು ತಾಸು ಕಾರಿನ ಪ್ರಾಯಾಣ ಡರ್ವೆಂಟ್ ಗೆ.  ಡರ್ವೆಂಟ್ ಕೂಡ ಪೀಕ್ ಡಿಸ್ಟ್ರಿಕ್ಟ್ ನ ಒಂದು ಮುಖ್ಯ ಪ್ರವಾಸಿ ತಾಣಗಲ್ಲಿ ಒಂದು . ಡೋವ್ ಡೇಲ್ ನಿಂದ ಡರ್ವೆಂಟ್ ಪ್ರಯಾಣವೇ ಸುಂದರ. ಇಕ್ಕೆಲಗಳಲ್ಲಿ ಇರುವ ಬೆಟ್ಟಗಳ ನಡುವೆ ಕಾರಿನಲ್ಲಿ ಹೋಗುವ ಅನುಭವ ಒಂದುರೀತಿಯ ಮುದ ನೀಡುತ್ತದೆ. ಹಸಿರು ಮತ್ತು ಹಳದಿ ಬಣ್ಣಗಳಿಂದ ಕುಡಿದ ಬೆಟ್ಟಗಳು ಮತ್ತು ಅಲ್ಲಲ್ಲಿ ಕುದುರೆ , ಮೇಕೆ , ಕುರಿಗಳು  ಮೇಯುತ್ತಿರುವುದನ್ನು  ಕಾಣಬಹುದು.  ಕೆಲವು ಭಾಗಗಳಲ್ಲಿ ಇಲ್ಲಿನ ಟ್ರೆಕಿಂಗ್ ಎಂದೇ ಬರುವ ಜನರು ನಡೆದು ಹೋಗುವುದು ಅಥವಾ ಸೈಕ್ಲಿಂಗ್ ಮಾಡಿಕೊಂಡು ಪ್ರವಾಸಿ ಸ್ಥಳಕ್ಕೆ ಹೋಗುತ್ತಿರುವುದು ಕಂಡುಬರುತ್ತದೆ.


ಡೋವ್ ಡೇಲ್ ಗೆ ಹೋಲಿಸಿದರೆ ಡರ್ವೆಂಟ್ ಸಂಪೂರ್ಣ ವಿಭಿನ್ನ ಎನಿಸುತ್ತದೆ. ಇದೊಂದು ನಿಸರ್ಗಧಾಮ . ಡಾರ್ವೆಂಟ್ ನಲ್ಲಿ ಹಸಿರು ಹಾಸಿ ಹೊದ್ದಂತಿರುವ ಸ್ಥಳದಲ್ಲಿ ಪ್ರವಾಸಿಗರಿಗೋಸ್ಕರವೇ ಕುಳಿತುಕೊಳ್ಳಲು ಅಲ್ಲಲ್ಲಿ ಕಲ್ಲಿನ ಬೆಂಚು. ಅಲ್ಲಿ ಕುಳಿತು ಎದುರುಗಿರುವ ಪ್ರಕೃತಿಯನ್ನು ನೋಡುತ್ತಿದ್ದರೆ ಸುತ್ತಲಿನ ಪ್ರಪಂಚವೇ ಮರೆತಂತ ಅನುಭವ.  ಇಲ್ಲಿ ಡರ್ವೆಂಟ್ ನದಿಗೆ  ಬ್ರಿಜ್ ಕಟ್ಟಲಾಗಿದೆ . ಜೊತೆಗೆ ಇದನ್ನು ಡರ್ಬಿಶೈರ್ ನ ಲೇಕ್ ಡಿಸ್ಟ್ರಿಕ್ಟ್ ಎಂದು ಕರೆಯಲಾಗುತ್ತದೆ. ಜೊತೆಗೆ ಇಲ್ಲಿ ಕಾಡುಗಳ ಮಧ್ಯೆ ನಡೆದುಕೊಂಡು ಹೋಗಿ ಪ್ರವಾಸಿ ಸ್ಥಳವನ್ನು ತಲುಪಬೇಕಾಗಿದ್ದು ಇದು ದಿನನಿತ್ಯದ ಜೀವನ ಜಂಜಾಟದಲ್ಲಿರುವವರಿಗೆ ಒಂದು ರೀತಿಯ ಪ್ರಶಾಂತ ವಾತಾವರಣವನ್ನು ನೀಡುತ್ತದೆ.

ಇಷ್ಟೇ ಅಲ್ಲದೆ ಪೀಕ್ ಡಿಸ್ಟ್ರಿಕ್ಟ್ ಗೆ ಹೋಗುವಾಗ ಆಗಾಗ ಬರುವ ಮಳೆ ಎದುರಿಸಲು ರೈನ್ ಕೋಟ್ ಅಥವಾ ಕೊಡೆ ಮತ್ತು ಬೆಟ್ಟವನ್ನು ಹತ್ತಲು ಟ್ರೆಕಿಂಗ್ ಗೆ ಸೂಕ್ತವಾದ ಶೂ  ಅನಿವಾರ್ಯ.

———————ಅರ್ಪಿತ ರಾವ್, ಬ್ಯಾನ್ಬರಿ


ಚಿತ್ರ ವಿಮರ್ಶೆ-  ’ಗಂಟು-ಮೂಟೆ ’


ಆ ಚಿತ್ರ ಪ್ರಾರಂಭವಾಗುವುದೇ ಹಾಗೆ ಚಲನಚಿತ್ರದ ಮೇಲೆ ಅತೀವ ಹುಚ್ಚನ್ನು ಹಚ್ಚಿಕೊಂಡಿರುವ ಹೆಣ್ಣು ಮಗಳು ಒಂಟಿಯಾಗಿ ಮೂವಿ ನೋಡಲು ಹೋದಾಗ ಅನಿವಾರ್ಯವಾಗಿ ಶೋಷಣೆಗೆ  ಒಳಗಾಗಿ ತತ್ತರಿಸಬೇಕಾಗುತ್ತದೆ . ಹಾಗಂತ ಇದು ಹೆಣ್ಣಿನ ಶೋಷಣೆಗೆ ಸಂಬಂಧ ಪಟ್ಟ  ಕಥೆಯಲ್ಲ. ಜೀವನದ ಪಯಣದಲ್ಲಿ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯ ಗಂಟು ಮೂಟೆ ಕಟ್ಟಿಕೊಂಡು ಓಡಾಡುತ್ತಿರುವವರೇ .

ನಾವು ಇರುವಷ್ಟು ದಿನ ನಮ್ಮ ಜೊತೆ ಕೆಲವು ಮರೆಯಲಾರದ ನೆನಪುಗಳನ್ನು ಹೊತ್ತು ಸಾಗುವುದು ಅನಿವಾರ್ಯ ಕೂಡ.  ಅಂತಹ ಒಂದು ಪ್ರಯಾಣವನ್ನು ತಿಳಿಸುವ ಚಿತ್ರವೇ ರೂಪ ರಾವ್ ನಿರ್ದೇಶನದ ಗಂಟು ಮೂಟೆ . ಒಂದು ಮುಗ್ದ ವಯಸ್ಸಿನ ಹೆಣ್ಣು ಮಗಳು  ವಯಸ್ಸಿಗೆ ಮೀರಿ ಪ್ರೀತಿಯಲ್ಲಿ ಮುಳುಗಿ ತನ್ನ ಬದುಕನ್ನೇ ಹೇಗೆ ತಿರುಗಿಸಿಕೊಳ್ಳಬಲ್ಲಳು ಎಂಬುದನ್ನು ಈ ಚಿತ್ರ ಮನದಟ್ಟು ಮಾಡುತ್ತದೆ. ಹದಿಹರೆಯದಲ್ಲಿ ಕಾಡುವ ಪ್ರೀತಿ ಹೇಗೆ ಜೀವನ ಪರ್ಯಂತ ಮರೆಯಲಾರದೆ ಬೆನ್ನತ್ತ್ತಿ ಬಂದುಬಿಡಬಹುದು ಎಂಬುದನ್ನು ತೋರಿಸುವ ಪ್ರಯತ್ನ ಈ ಚಿತ್ರದಲ್ಲಿದೆ .ಚಿತ್ರದಲ್ಲಿ ಕಂಡು ಬರುವ ಕೆಲವು ಘಟನೆಗಳು ಬಹುತೇಕ ಜನರು ಶಾಲಾ ಕಾಲೇಜುಗಳಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಅನುಭವಿಸಿರುವುದು ನಿಜವಾದ್ದರಿಂದ ನೋಡುಗರನ್ನು ನೆನಪಿನ ಲೋಕಕ್ಕೆ ಕರೆದುಕೊಂಡು ಹೋಗಬಹುದಾದ ಚಿತ್ರವಿದು.

ಚಲನಚಿತ್ರ ನೋಡಿ , ಪ್ರೀತಿಯ ಬರಹಗಳನ್ನು ಬರೆದು , ಚಲನಚಿತ್ರದ ಹೀರೋ ಗಳ ಮೇಲೆ ಬೆಳೆಯುವ ಪ್ರೀತಿ ಕೊನೆಗೆ ತನಗೂ ಅಂತಹದೇ ಒಂದು  ಹುಡುಗನನ್ನು ಹುಡುಕುವಲ್ಲಿ ತಲ್ಲಣಿಸುತ್ತದೆ ಎಂದು ಕೂಡ ಈ ಚಿತ್ರದಲ್ಲಿ ತೋರಿಸಲಾಗಿದೆ. ಪ್ರಬುದ್ಧವಾಗಿ ಬೆಳೆಯುವ ಮೊದಲೇ ಇಂತಹ ಆಸೆಗಳಿಗೆ ಒಳಗಾಗುವ ಹೆಣ್ಣು ಮುಂದೇನೆ್ಲ್ಲ ಅನುಭವಿಸಬೇಕಾಗಬಹುದು ಎಂಬುದನ್ನು ತೋರಿಸುವ ಪ್ರಯತ್ನ ರೂಪ ರಾವ್ ಮಾಡಿದ್ದಾರೆ .   ಚಲನ ಚಿತ್ರ ಸಂಪೂರ್ಣವಾಗಿ ೯೦ ರ ದಶಕದಲ್ಲಿ ನಡೆದಿರಬಹುದಾದ ಘಟನೆಗಳಂತೆ ಪತ್ರ ಮತ್ತು ಲ್ಯಾಂಡ್ಲೈನ್ ಫೋನ್ ಇಂತವನ್ನೆಲ್ಲ ತೋರಿಸಿದರೂ ಕೂಡ ಹೆಚ್ಚಿನ ಕಡೆ ಇದು ಇಂದಿಗೂ ಕೂಡ ಅನ್ವಯಿಸುತ್ತದೆ ಎಂದು ನನ್ನ ಅಭಿಪ್ರಾಯ. ಇಂದು ಕೂಡ ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳಲ್ಲಿ ಇಂತಹ ಆಸೆ ಆಕಾಂಕ್ಷೆಗಳು ಸಹಜ ಮತ್ತು ಅದು ಕೂಡ ಇಂತಹದೇ ಪರಿಣಾಮವನ್ನು ಬೀರಿದ ಉದಾಹರಣೆಗಳನ್ನು ನಮ್ಮ ಸುತ್ತಮುತ್ತಲೇ ಕಾಣಬಹುದು.

ಈಗಿನ ಹೈಸ್ಕೂಲ್ ಮತ್ತು ಕಾಲೇಜಿನ ಮಕ್ಕಳು ಈ ಚಿತ್ರವನ್ನು ನೋಡಿ ತಾವೂ ಹೀಗಾಗಬಾರದು ಎಂಬುದನ್ನು ಮನಗೊಳ್ಳಬೇಕು ಎಂಬ ಸಂದೇಶವನ್ನು ಸಾರ ಹೊರಟಿರುವ ಚಿತ್ರವಿದು . ಆದರೆ ಅಲ್ಲಲ್ಲಿ ಕಂಡು ಬರುವ ಅಗತ್ಯಕ್ಕಿಂತ ಹೆಚ್ಚೆನಿಸುವ ಪ್ರೇಮಕ್ಕಿಂತ ಆ ಸಮಯದಲ್ಲಿ ಕಂಡುಬರುವ ಬಯಕೆಯನ್ನು ತೋರಿಸುವ ಕಿಸ್ಸಿಂಗ್ ಸೀನ್ ಗಳು ಮುಜುಗರ ಉಂಟು ಮಾಡುವಂತೆಯೂ ಅದರ ಅವಶ್ಯಕತೆ ಇರಲಿಲ್ಲ ಎಂದು ಕೂಡ ಅನ್ನಿಸುತ್ತದೆ.  ಹದಿಹರೆಯದ ಪ್ರೀತಿ ಹೇಗೆ ಮಕ್ಕಳ ಜೀವನವನ್ನೇ ಹಾಳುಮಾಡಿಬಿಡಬಲ್ಲದು ಎಂಬುದನ್ನು ಇಲ್ಲಿ ತೋರಿಸಲಾಗಿದೆ.  ಹದಿಹರೆಯದ ಸಮಯದಲ್ಲಿ ಹುಟ್ಟುವ ಮೊದಲ ಪ್ರೀತಿ ಕೊನೆಯವರೆಗೂ ಇರುತ್ತದೆಯೋ ಇಲ್ಲವೋ ಆದರೆ ಅದರ ನೆನಪು ಮಾತ್ರ ಕಾಡುವುದು ಖಂಡಿತ ಎಂಬುದು ಈ ಚಲನಚಿತ್ರದ ಪೂರ್ಣ ಸಂದೇಶ. ಅಂತಹ ವಯಸ್ಸಿನಲ್ಲಿ ತೆಗೆದುಕೊಳ್ಳುವ ನಿರ್ಧಾರ ಇಡೀ ಇಬ್ಬರ ಜೀವನವನ್ನೇ ಹಾಳುಮಾಡಿಬಿಡಬಹುದು ಅಥವಾ ಒಂದು ವ್ಯಕ್ತಿತ್ವವನ್ನು ರೂಪಿಸಲು ಬುನಾದಿ ಆಗಿಬಿಡಬಹುದು ಎಂಬುದನ್ನು ತೋರಿಸಿರುವ ಚಿತ್ರವಿದು. ಕಥಾನಾಯಕಿಯನ್ನೇ ಮುಖ್ಯವಾಗಿ ಇಟ್ಟುಕೊಂಡು ಮಾಡಿರುವ ಈ ಚಿತ್ರದಲ್ಲಿ ತೇಜು ಬೆಳವಾಡಿಯವರ ಪಾತ್ರ ಸಹಜ ಸುಂದರವಾಗಿ ಮೂಡಿ ಬಂದಿದೆ.

      ರೂಪ ರಾವ್-ನಿರ್ದೇಶಕಿ

ಚಿತ್ರದಲ್ಲಿ ಬರುವ ಹಾಡುಗಳು ಒಳ್ಳೆಯ ಸಾಹಿತ್ಯವನ್ನು ಹೊಂದಿದ್ದು , ಕಾಲೇಜಿನ ಮಕ್ಕಳ ಮನಸ್ಥಿತಿ ಸಾರುತ್ತದೆ. ಕಥೆಗೆ ತಕ್ಕ ಪಾತ್ರವನ್ನು ಮಾಡುವಲ್ಲಿ ನಿಶ್ಚಿತ್ ಮತ್ತು ತೇಜು ಬೆಳವಾಡಿ ಇಬ್ಬರೂ ಯಶಸ್ವಿಯಾಗಿದ್ದಾರೆ. ಕಥಾ ನಾಯಕನಾದ ನಿಶ್ಚಿತ್ ಕೂಡ ಚಲನಚಿತ್ರ ಮುಗಿದ ನಂತರವೂ ಮನಸ್ಸಿನಲ್ಲಿ ಉಳಿಯುತ್ತಾರೆ . ನೀವೂ ಒಮ್ಮೆ ಈ ಚಲನಚಿತ್ರ ವೀಕ್ಷಿಸಿ ಮತ್ತು ಹಳೆಯ ದಿನಗಳ ಮೆಲುಕುಹಾಕಿ.-ಅರ್ಪಿತ ರಾವ್, ಬ್ಯಾನ್ಬರಿ

(ಮುಂದಿನ ವಾರ -ದೃಶ್ಯ ಕಾವ್ಯಗಳು)