ಚಿತ್ರ ಬರೆಸಿದ ಕವಿತೆ

 ಓದುಗರಿಗೆಲ್ಲ ಆತ್ಮೀಯ ನಮಸ್ಕಾರ,
ಸಾಮಾಜಿಕ ಜಾಲತಾಣಗಳು ಮನುಷ್ಯನ ಭಾವಾಭಿವ್ಯಕ್ತಿಗೆ ಸಶಕ್ತ ಮಾಧ್ಯಮಗಾಳಾಗಿವೆ. ಬರವಣಿಗೆ, ಹಾಡು, ಅನಿಸಿಕೆ ಅಭಿಪ್ರಾಯಗಾಲ ಜೊತೆಗೇ ಸೋಶಿಯಲ್ ಮೀಡಿಯಾಗಳಲ್ಲಿ ಫೋಟೋ ಹಾಕುವುದು, ಬಹಳಷ್ಟು ಜನರ ಪ್ರಮುಖವಾದ ಹವ್ಯಾಸವಾಗಿ ಬದಲಾಗಿದೆ. ಫೋಟೋ ವಿಡಿಯೋ ಹಾಕುವ ಕಾಯಕವೇ ಹಣಗಳಿಸುವ ಉತ್ತಮ ವೇದಿಕೆಯಾಗಿಯೂ ಮಾರ್ಪಟ್ಟಿದೆ. ಒಂದಿಷ್ಟು ಜನ ತಮ್ಮ ವೈಯಕ್ತಿಕ ಜೀವನವನ್ನು ಚಿತ್ರಗಳ ಮೂಲಕ ಜಗತ್ತಿನ ಮುಂದೆ ಅನಾವರಣ ಗೊಳಿಸಿದರೆ, ಮತ್ತೊಂದಷ್ಟು ಜನ ಹೂವು, ಹಣ್ಣು, ನೀರು, ಆಕಾಶ, ಕೀಟ, ಹಕ್ಕಿ ಅಂತೆಲ್ಲ ನಮ್ಮ ಸುತ್ತಲಿನ ಸುಂದರ ಜಗತ್ತನ್ನು ಇನ್ನೂ ಸುಂದರವಾಗಿ ತಮ್ಮ ಚಿತ್ರಗಳ ಮೂಲಕ ಚಿತ್ರಿಸಿ ನಮ್ಮ ಮುಂದಿಟ್ಟು ರಂಜಿಸುತ್ತಾರೆ. ಈ ಚಿತ್ರಗಳು ಪರಿಚಯವೇ ಇಲ್ಲದ ಜಗತ್ತಿನ ಅದ್ಯಾವುದೋ ಮೂಲೆಯಲ್ಲಿದ್ದುಕೊಂಡು ಮತ್ತೊಬ್ಬ ಸಮಾನಸಕ್ತನ ಭಾವಕೋಶದ ಪದರನ್ನು ಮೆತ್ತಗೆ ತಟ್ಟಿ, ಸ್ಫೂರ್ತಿ ಕೊಡುತ್ತವೆ. ಕವಿಮನಸನ್ನು ಆವರಿಸಲು ಯಶಸ್ವಿಯಾದ ಒಂದೇ ಒಂದು ಭಾವಚಿತ್ರ ಸಾವಿರ ಭಾವಗಳನ್ನು ಪದಗಳಲ್ಲಿ ಹೊಮ್ಮಿಸಲೂಬಹುದು.

ನಾನು ಆಗಾಗ್ಯೆ, ನನ್ನ ಕ್ಯಾಮೆರಾ ಮತ್ತು ಫೋನಿನಲ್ಲಿ ತೆಗೆದ ಚಿತ್ರಗಳನ್ನ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ಎಂಬ ಸಾಮಾಜಿಕ ಜಾಲತಾಣಗಲ್ಲಿ ಹಂಚಿಕೊಳ್ಳುತ್ತಾ ಇರುತ್ತೇನೆ. ಅಲ್ಲಿರುವ ಕೆಲ ಕವಿ ಹೃದಯಗಳಿಗೆ ನಾನು ಹಂಚಿಕೊಂಡ ಚಿತ್ರಗಳು ಇಷ್ಟವಾಗಿ ಅವರ ಮನ ಸೃಜಿಸಿದ ಭಾವವನ್ನು ಅಕ್ಷರರೂಪಕ್ಕಿಳಿಸಿ ನನ್ನೊಂದಿಗೆ ಹಂಚಿಕೊಳ್ಳುತ್ತಾರೆ.
ಇತ್ತೀಚಿಗೆ ಲ್ಯಾಂಡ್ ಸ್ಕೇಪ್, ಹೂ, ನದಿ, ಚಿಕ್ಕ ಚಂದ್ರರ ಫೋಟೋ ಕ್ಲಿಕ್ ಮಾಡುವಾಗಲೆಲ್ಲ, ಈ ಸ್ನೇಹಿತರು ನೆನಪಾಗಿ ಬಿಡುತ್ತಾರೆ. ಈ ಚಿತ್ರ ಇವರಿಗೆ ಇಷ್ಟ ಆಗಬಹುದು/ಆಗುತ್ತದೆ ಎಂದು ಮನಸ್ಸು ಹೇಳುತ್ತದೆ.

ನಾನು ಕ್ಲಿಕ್ಕಿಸಿದ ಭಾವಚಿತ್ರವನ್ನು ಸ್ಫೂರ್ತಿಯಾಗಿ ಕವಿತೆಯನ್ನು
ಬರೆದು ಕಳಿಸುವ ನನ್ನ ಮೆಚ್ಚಿನ ಮೇದಿನಿ, ಈಶ್ವರ ಭಟ್ ಕೆ, ಮತ್ತು ಗುರುರಾಜ ಹೇರ್ಳೆ ಅವರನ್ನು ಅನಿವಾಸಿ ಬಳಗಕ್ಕೆ ಪರಿಚಯಿಸಿ,
ಚಿತ್ರಗಳೊಂದಿಗೆ, ಅವರ ಕವಿತೆ ಹಂಚಿಕೊಳ್ಳುತ್ತಿರುವೆ .
—ಅಮಿತಾ ರವಿಕಿರಣ್ ( ವಾರದ ಸಂಪಾದಕಿ)
ಈ ನೀಲಿಯಾಚೆಗೆ....

ಈ ನೀಲಿಯಾಚೆಗೆ ಆ ಮೋಡದೀಚಿಗೆ
ನಗುತಿರುವ ಸಗ್ಗವೊಂದಿದೆ ಅಲ್ಲಿ ಬಾ
ನೀಲಿಯೊಳು ಮೈಮರೆತು ಮೋಡದೊಳು
ಮರೆಯಾಗಿ ಜಗವನ್ನೆ ಹೊರನೂಕಿ ಮೆರೆಯೋಣ ಬಾ

ಬಾನು ಭುವಿ ಮೈಮರೆತು ಮಾತನಾಡುವುದಲ್ಲಿ
ಮರದ ಮಾತೆಲ್ಲವೂ ಮೋಡದೊಡನೆ ಧುಮ್ಮಿಕ್ಕಿ
ಹಾಲ್ನೊರೆಯ ತೇಲಿಸುವ ನದಿಯೊಂದು
ಸಂಭಾಷಿಸಿಹುದು ತೀರದೊಡನೆ

ಮಾತು ಮರೆತಿಹ ಮನಸು
ನೋಟ ಮರೆತಿಹ ಅಕ್ಷಿ
ಕಾಲ ಪ್ರವಾಹದಲಿ ಕಳೆಯೋಣ ಬಾ
ಮೌನದಾಚೆಯ ಮಾತು ಕಣ್ಣಿನಾಚೆಯ ನೋಟ
ಹೇಳುತಿದೆ ಏನನ್ನೊ ಕೇಳೋಣ ಬಾ

ಕುಂತಲ್ಲಿ ಏನಿಹುದು, ನಿಂತಲ್ಲಿ ಸೊಗಸೇನು
ಸಾಗಿ ಹೋಗೋಣ ಆ ತೀರದೆಡೆಗೆ
ನೀಲಿಯಾಚೆಯ ನಾಡು ಮೋಡದೀಚೆಯ
ಜಾಗ ಸೃಷ್ಟಿಯಾಗಿಹ ನೀಲ ಸ್ವರ್ಗದೆಡೆಗೆ

ತಬ್ಬುವುದೆಂದರೇನು ಸಖೀ?!

ತಬ್ಬುವುದೆಂದರೇನು ಸಖೀ?!
ತೋಳುಗಳ ಬಂಧನವೇ?
ಹೃದಯದ ಬೆಸುಗೆಯೇ
ಅಗಲಿರಲಾರೆನೆಂದು ಕೈ ಮೇಲೆ ಕೈಯಿಟ್ಟ ಪ್ರಮಾಣವೇ?

ತಬ್ಬುವುದೆಂದರೇನು ಸಖೀ?
ದಿನದ ಅಷ್ಟೂ ಘಳಿಗೆಯಲ್ಲೂ
ಜೊತೆಗಿದ್ದು
ಅಂಟಿಯೂ ಅಂಟದಂತೆ
ನವಿರಾಗಿ ತಾಗುತ್ತಾ
ಕಣ್ಣಲ್ಲೇ ಹೊರಡಿಸುವ ಪ್ರೇಮದ ನೋಟವೇ?

ತಬ್ಬುವುದೆಂದರೇನು ಸಖೀ?
ನೀಲಾಕಾಶವು
ನೀಲಸಮುದ್ರವ ಕರೆಯುತ್ತಾ
ನಾ ಕೆಳಗಿಳಿದೆ, ನೀ ಮೇಲೆ ಬಾ ಎನ್ನುವ
ಸಂಭ್ರಮದಿ
ತಾಗಿಯೂ, ತಾಗದಿರುವುದೇ
ತಬ್ಬುವುದೆಂದರೇನು ಸಖೀ?!

ಈಶ್ವರ ಭಟ್ ಕೆ (ಕಿರಣ),

ಮೂಲತಃ ಕಾಸರಗೋಡು ಕೇರಳದವರು. ಈಗ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿ. ಹವ್ಯಾಸ ಬರಹ, ತಿರುಗಾಟ.
ಗಡಿನಾಡಿನ ಸೀಮೆಯವರು ಆಗಿದ್ದಕ್ಕೂ ಏನೋ, ಕಿರಣರಿಗೆ ದಕ್ಷಿಣ ಭಾರತದ ಎಲ್ಲ ಭಾಷೆಗಳೂ ಮಾತಾಡಲು ಮತ್ತು ಓದಲು ಬರೆಯಲು ಬರುತ್ತದೆ ಅದೇ ಕಾರಣದಿಂದ ಆ ಭಾಷೆಯ ಕಥೆ, ಕವನ, ಭಜನೆಗಳನ್ನು ತುಂಬಾ ಸುಂದರವಾಗಿ ಕನ್ನಡಕ್ಕೆ ಅನುವಾದಿಸುತ್ತಾರೆ.
ಇವರ ಕವಿತೆಗಳು ಸರಳವಾಗಿ ಹಾಡಿಸಿಕೊಂಡು ಹೋಗುತ್ತವೆ. ರಾಗಕ್ಕೆ, ತಾಳಕ್ಕೆ ಹೊಂದುವ ಸಾಹಿತ್ಯ ಬರೆಯುವ ಇವರು, ಹಾಸ್ಯಬರಹ, ಮತ್ತೆ ಅಷ್ಟೇ ಗಂಭೀರ ವಿಷಯಗಳನ್ನೂ ಬರೆಯಬಲ್ಲರು.

ಮಲ್ಲಿಗೆಯವಳು.

ಹೂವಬುಟ್ಟಿಯ ಹೊತ್ತು ಮಲ್ಲಿಗೇ ಮಲ್ಲಿಗೇ
ಎಂದೆನುತ ಬಂದಳೋ ಬಿಂಕದವಳು
ಮೊಳಕೆ ಎಷ್ಟೆಂದರೆ ಕಣ್ಣಲ್ಲೆ ಗದರಿಸುತ
ಹಣದ ಲೆಕ್ಕಾಚಾರ ಯಾಕೆಂಬಳು!

ಮೊಳಕೆ ಮೂವತ್ತಾಯ್ತೆ? ಮೊನ್ನೆ ಇಷ್ಟಿರಲಿಲ್ಲ
ಪಿಸುಮಾತಿಗಳಿಗಿಷ್ಟು ಕೋಪಗೊಂಡು;
ಮಲ್ಲಿಗೆಯ ಗಿಡಕೆಲ್ಲ ರೋಗ ಬಂದಿದೆ ಒಡೆಯ
ಮೊನ್ನೆಯಷ್ಟಿಲ್ಲ ಹೂ ಎಂದೆಂಬಳು.

ಒಂದು ಮೊಳ ಸಾಕೆನಗೆ, ತೆಗೆದುಕೋ ನಲುವತ್ತು
ಎಂದಾಡಿದರೆ ಮತ್ತೆ ಜನ್ಮ ಹೊರಗೆ;
ಮಾಲೆ ಕಟ್ಟುವ ಸಮಯ ಪರಿಮಳವ ಕುಡಿದೆಹೆನು
ನಾ ಹೇಳುವಷ್ಟನೇ ಕೊಡು ಎಂದಳು.

ಮೊಳ ಕತ್ತರಿಸುವಾಗ ಒಂದಿಷ್ಟು ಹೆಚ್ಚಿಸುತ
ಜೊತೆಗಷ್ಟು ಗುಲಾಬಿ ತೆಗೆದಿಡುತಲಿ;
ಹೂವನ್ನು ಹೆಚ್ಚಿಸುವ ಖುಷಿ ತುಂಬುಮೊಗದಲ್ಲಿ
ನಾಳಿನಾ ಭರವಸೆಯ ನಗು ನಕ್ಕಳು.
ಸೂರ್ಯಾಸ್ತ!

ಅಲ್ಲಿ ಕೆರೆಯಂಚಿನಲಿ, ಮುಳುಗುತಿಹ ನೇಸರಗೆ
ಮರದ ಹಸಿರನು ಕಪ್ಪು ಮಾಡುವಾಸೆ
ಇಲ್ಲಿಯೋ ತಂಗಾಳಿ ಬಿಸಿಯೇರೆ ಹಣಕಿಸುತ
ಹತ್ತಿರಕೆ ಕಳಿಸುವುದು, ಒಲವಿನಾಸೆ!

ಎಷ್ಟು ಮಾತುಗಳಾಡಿ, ಜಗಳದಲಿ ಒಂದಾಗಿ
ಮತ್ತೆ ಮಾತಿನ ದೋಣಿ ತೇಲಿಹೋಗಿ
ಸುತ್ತ ಕತ್ತಲೆ ಹಬ್ಬಿ ಮಾತು ಮೌನಕೆ ದಣಿದು
ಅವಳ ಸಾಮೀಪ್ಯವನೆ ಅಲೆವ ರೋಗಿ

ಹಾರುವುದು ಎದೆಗನಸು ನೂರು ಮೈಲಿಗಳಾಚೆ
ಅಲ್ಲಿಯೂ ನೇಸರನು ಮುಳುಗುತಿಹನು
ಅವಳಿಗೂ ಇದೆ ನೆಪವು, ಇಂತಹದೆ ಬೇಸರವು
ಏನನೋ ಕಾಯುವುದು, ಹೆಳವ ನಾನು.

ಒಂದು ದಿನವಾದರೂ ಸಂಜೆಯಾಗದೆ ಇರಲಿ
ದೂರವಿಹ ವಿರಹಿಗಳ ಎದೆಯ ಸುಡದೆ ಮಂದಮಾರುತ ಹೋಗಿ ಸುಖಿಪವರ ಜೊತೆಗಿರಲಿ
ನನ್ನ ಕಾಡಲುಬೇಡ, ಅವಳು ಸಿಗದೆ




ಗುರುರಾಜ ಹೇರ್ಳೆ

 ಮೂಲತಃ ಉಡುಪಿ ಜಿಲ್ಲೆಯ ಸಾಲಿಗ್ರಾಮ ಎಂಬ ಊರಿನವರು. ಪ್ರಸ್ತುತ  ಬಹರೈನ್ ಎಂಬ ಪುಟ್ಟ ದ್ವೀಪ ರಾಷ್ಟ್ರದಲ್ಲಿ ಉದ್ಯೋಗಿ  ವಾಸ. ಪ್ರಾರಂಭಿಕ ಓದು, ಬೆಳವಣಿಗೆ ಎಲ್ಲ ಉಡುಪಿಯಲ್ಲೇ ಆದರೂ, ಉನ್ನತ ವ್ಯಾಸಂಗ ಮತ್ತು ಉದ್ಯೋಗಕ್ಕಾಗಿ ಬೆಂಗಳೂರಿನಲ್ಲಿಯೂ ಒಂದಷ್ಟು ಕಾಲ ವಾಸಮಾಡಿದ್ದಾರೆ. 
ಇವರು ಒಳ್ಳೆಯ ಹಾಡುಗಾರರು. ಭಾವಗೀತೆಗಳ ಮೇಲೆ ಒಲವು ಜಾಸ್ತಿ. ಮಕ್ಕಳ ಹಾಡುಗಳು, ಪ್ರೇಮಗೀತೆಗಳನ್ನು ಬರೆಯುತ್ತಾರೆ. ಬರೆದ ಪದ್ಯಕ್ಕೆ ರಾಗ ಹಾಕಿ ಹಾಡುತ್ತಾರೆ ಕೂಡ

ಸಾಗರ ಸನ್ನಿಧಿ

ನೀಲ ಸಾಗರವನ್ನು ನೆಚ್ಚಿ ದೋಣಿಯೊಂದು ಸಾಗಿದೆ,
ಹಾಯಿ ಬಿಚ್ಚಿ ಗಾಳಿ ಬೀಸೋ ದಿಕ್ಕಿನತ್ತೇ ನಡೆದಿದೆ

ನಾಂತದಲ್ಲಿ ಬಾನು ಬುವಿಯು ಸೇರಿದಂತೆ ಭಾಸವು
ತೀರ ಸಿಗದ ದಾರಿಯಲ್ಲಿ ಮುಗಿಯದಿರುವ ಯಾನವು

ಒಮ್ಮೆ ಇಳಿತ ಒಮ್ಮೆ ಭರತ, ಏಳು ಬೀಳಿನಲೆಗಳು
ಒಮ್ಮೆ ನೋವು ಒಮ್ಮೆ ನಲಿವು, ಇದುವೇ ಜೀವನ ರೀತಿಯು

ಕಣ್ಣು ಹಾಯಿಸಿದಷ್ಟು ನೀರು ಕುಡಿಯಲಿನಿತು ಸಾಧ್ಯವೇ ?
ಬಾಳಿನಲ್ಲೂ ನೂರು ಜನರು, ಎಲ್ಲ ಜೊತೆಗೆ ಬರುವರೇ ?

ಅಲ್ಲಿ ಇಲ್ಲಿ ಸಿಗಲು ಬಂಡೆ ದಣಿವನಾರಿಸಬೇಕಿದೆ,
ಹಳೆಯ ತಪ್ಪನೆಲ್ಲ ಮರೆಯದೆ ದಾರಿ ಸಾಗಬೇಕಿದೆ
ಗಮ್ಯ ತಲುಪಬೇಕಿದೆ.
ಬಂದೇ ಬರುತಾವ ಕಾಲ.

ಈ ಸಮಯವೂ ಸರಿದು ಹೋಗಲೇಬೇಕು
ನಮಗೆಂದೇ ಒಂದು ಕಾಲ ಬರಲೇಬೇಕು

ಕರೆದ ಹಾಲದು ಕೆನೆಯ ಕಟ್ಟಲುಬೇಕು
ಹೆಪ್ಪುತಾಗೆ ಗಟ್ಟಿಮೊಸರು ಆಗಲೇಬೇಕು,
ಕಡೆಯಲದನು ಬೆಣ್ಣೆ ಮೇಲೆ ತೇಲಲೇಬೇಕು
ಬಿಸಿತಾಕಲು ಕರಗಿ ತುಪ್ಪವಾಗಲೇಬೇಕು

ಹರುಷ ಹೊನಲಿನ ನದಿಯು ಉಕ್ಕಲೇಬೇಕು
ಮುನಿದ ದೈವವು ಮುಗುಳು ನಗಲುಬೇಕು
ಬಾಡಿದಂತ ಲತೆಯು ಮತ್ತೆ ಚಿಗುರಲುಬೇಕು
ಮುದುಡಿದ ತಾವರೆ ಅರಳುತ ನಲಿಯಲೇಬೇಕು

ಇರುಳಲಿ ಕರಗಿದ ತಿಂಗಳು ಮೂಡಲೇಬೇಕು
ಮುಳುಗಿದ ರವಿ ಮೂಡಣದಿ ಹುಟ್ಟಲೇಬೇಕು
ಧಗೆಯೇರಲು ಮೇಘ ಕರಗಿ ಸುರಿಯಲೇಬೇಕು,
ಸುಖ ಶಾಂತಿ ನೆಮ್ಮದಿಯ ತರಲೇಬೇಕು


ದೀಪಾವಳಿ ಕವಿತೆ ಮತ್ತು ಅನಬೆಲ್ಲ ಹೇಳಿದ ಅಮರಾಂತೆ ಕಥೆ.

ಎಳ್ಳೆಣ್ಣೆಯ ಎರಡು ದೀಪ. 
            _ ಡಾ. ದಾಕ್ಷಾಯಿಣಿ ಗೌಡ 


ಈ ಬಾರಿ,ಹೊಸ ಪರಿಯ ಕಳಕಳಿ
ನಮ್ಮ ನಿಮ್ಮೆಲ್ಲರ ಈ ದೀಪಾವಳಿ

ನಮ್ಮೂರಲ್ಲಿ, ಗೃಹಜ್ಯೋತಿಯ ಆಗಮನ,
ಆದರೇನು, ಯೂನಿಟ್ನ ಮಿತಿಮೀರದೆಡೆ ಗಮನ
ಸಾಮಾನ್ಯರಿಗೆ ಎಣ್ಣೆ ಬಲು ದುಬಾರಿ,
ಸರ್ಕಾರದ ಖರ್ಚಿನಲ್ಲಿ ಕೋಟಿ ದೀಪಗಳ ಅದ್ದೂರಿ.
ಮನೆಮುಂದೆ ಮಿನುಗುತ್ತಿದೆ ಎಳ್ಳೆಣ್ಣೆಯ ಎರಡು ದೀಪ.

ಈ ಊರಲ್ಲೂ ಬಗ್ಗುತ್ತಿಲ್ಲ ಹಣದುಬ್ಬರ
ಕೈಗೆಟುಕದು ಬಡತನಕೆ ವಿದ್ಯುತ್ ದರ.
ಬಿಸಿ ಊಟ, ಬಿಸಿಗಾಳಿ ಆಶಿಸುವ ಎದೆ, ಉದರ,
ಎಚ್ಚರಿಕೆ, ಕೂಗುತಿದೆ, ಹಿಮಗಾಳಿಯ ಅಬ್ಬರ.
ಮನೆಮುಂದೆ ಮಿನುಗುತ್ತಿದೆ ಎಳ್ಳೆಣ್ಣೆಯ ಎರಡು ದೀಪ.

ಕಾಂಚಾಣ ಕುಣಿಸಿದಂತೆ ಆಡುವ, ತೂಗುವ ಬೆಳಕು,
ಗಗನ ಕುಸುಮ, ಬಡತನಕೆ, ಬಹುದೀಪಗಳ ಥಳುಕು.
ಲಕ್ಷದೀಪವಿರಲಿ, ಕಗ್ಗತ್ತಿನ ಕತ್ತಲಿರಲಿ ಹೊರಗೆ,
ಮಿನುಗಲಿ ನಿಮ್ಮ ನಮ್ಮೊಳಗೆ ಆನಂದದ ದೀಪ,
ಹೊಸಬಗೆಯ ಬೆಳಕಲಿ, ಬೆಳಗಲಿ ನಮ್ಮ ಸೃಷ್ಟಿಯ ದ್ವೀಪ.

ಅನಬೆಲ್ಲ ಹೇಳಿದ ಅಮರಾಂತೆ ಕಥೆ - ಡಾ.ಮುರಳಿ ಹತ್ವಾರ್ 
                     

ಅಮರಾಂತೆ ಪೋರ್ಚುಗಲ್ಲಿನ ಒಂದು ಸಣ್ಣ ಊರು. ಅದರ ಮಧ್ಯದಲ್ಲೊಂದು ನದಿ, ಅದರ ಹೆಸರು ತಮೆಗಾ. ಡ್ಯುರೋ ನದಿಯ ಉಪನದಿಯಾದ ಇದರ ಒಂದು ಕಡೆ ಈಗ ಹೊಟೇಲಾಗಿರುವ ಹಳೇ  ಕಾಲದ ಶ್ರೀಮಂತನ ಬಂಗಲೆ ಮತ್ತದರ ಸುತ್ತ ಬೆಳೆದ ಮನೆಗಳು, ಅಂಗಡಿಗಳು ಇತ್ಯಾದಿ. ಇನ್ನೊಂದು ಕಡೆ, ಸಂತ ಗೋನ್ಸಾಲನ ಇಗರ್ಜಿ ಮತ್ತದರ ಹಿಂದೆ ಯಾವತ್ತೋ ಇದ್ದ ಕಾಡನ್ನು ಮರೆಸಿ ಬೆಳೆದ ಊರು. ಮಧ್ಯದಲ್ಲೊಂದು ಅವೆರಡನ್ನೂ ಸೇರಿಸುವ ಹಳೆಯ ಬ್ರಿಡ್ಜ್ . ಸುಮಾರು  ೭೦೦ ವರ್ಷದ ಹಿಂದೆ ಇದ್ದ, ಮೊದಲು ಪಾದ್ರಿಯಾಗಿ, ಆಗಾಗ ಪವಾಡ ಮಾಡಿ, ದೊಡ್ಡ ಮೊನಾಸ್ಟರಿಯೊಂದನ್ನು ಕಟ್ಟಿ, ಕಡೆಗೆ ಸಂತರಾದ ಗೋನ್ಸಾಲರ ಇಗರ್ಜಿಯ ಅಮರಾಂತೆ ಈಗ ಪೊರ್ಟೊ ನಗರದಿಂದ ಡ್ಯುರೋ ಕಣಿವೆಗೆ ಮುಂಜಾನೆ ಹೊರಟು ಸಂಜೆಗೆ ಮರಳುವ ಪ್ಯಾಕೇಜ್ ಟೂರಿಗರಿಗೆ ಮೊದಲು ಸಿಗುವ ಸ್ಟಾಪ್. 

ಪೊರ್ಟೊ ದಲ್ಲಿ ಮುಂಜಾನೆ ಎಂಟಕ್ಕೆ ಟೂರಿನ ಮಿನಿ ಬಸ್ ಆಫೀಸಿಗೆ ವಿಧೇಯ ವಿದ್ಯಾರ್ಥಿಗಳಂತೆ ಅರ್ಧ ಗಂಟೆ ಮುಂಚೆಯೇ ತಲುಪಿದ್ದ ನಮಗೆ, ಅಲ್ಲಿನ ಏಜೇಂಟ್ ಒಬ್ಬ ನಮ್ಮ ಬಸ್ ನಂಬ್ರ ೧೯ ಮತ್ತು ಗೈಡ್ ಅನಬೆಲ್ಲ ಎಂದು ಪ್ರಿಂಟಾದ ಚೀಟಿ ಕೊಟ್ಟ. ಅದಾಗಿ ಸ್ವಲ್ಪ ಹೊತ್ತಿಗೆ ಆ ಬಸ್ಸು ಮತ್ತದರೊಟ್ಟಿಗೆ ಬಂದಿಳಿದ ಮಧ್ಯ ವಯಸ್ಸಿನ ಸ್ಥೂಲ ಕಾಯದ ಅನಬೆಲ್ಲ, ಗಟ್ಟಿ ದನಿಯಲ್ಲಿ ಬಸ್ಸಿನ ನಂಬ್ರ ಮತ್ತೆ ಹೊರಡುವ ಟೈಮನ್ನು ಮೊದಲು ಇಂಗ್ಲಿಷಿನಲ್ಲೂ ನಂತರ ಫ್ರೆಂಚಿನಲ್ಲೂ ಕೂಗಿ, ಆ ಕರೆಗೆ ಕಾದವರಂತೆ ಗಡಿಬಿಡಿಯಲ್ಲಿ ಅನಬೆಲ್ಲ ಸುತ್ತ ಸೇರಿದ ಜನರನ್ನ ಬಸ್ಸೇರಿಸಿ, ಕಡೆಗೆ ತಾನೂ ಹತ್ತಿ ಮುಂದಿನ ಸೀಟಿನಲ್ಲಿ ಕುಳಿತು,  ಕೈಗೊಂದು ವಯರಿನ ಮೈಕೆಳೆದುಕೊಂಡು ಮಾತು ಶುರುಮಾಡಿದಳು. 

ಅವಳ ಮಾತುಗಳು ರೆಕಾರ್ಡೆಡ್ ಟೇಪಿನಂತೆ ಇಂಗ್ಲಿಷ್-ಫ್ರೆಂಚ್ ತಾಳದಲ್ಲಿ ಬಸ್ಸಿನ ಕಿಟಕಿಯಾಚೆ ಕಾಣುವ ಐತಿಹಾಸಿಕ ಕಟ್ಟಡಗಳು, ಬ್ರಿಡ್ಜುಗಳು, ಸುರಂಗಳು ಅವನ್ನೆಲ್ಲ ಆದಷ್ಟು ಕಡಿಮೆ ಶಬ್ದಗಳಲ್ಲಿ ಹೇಳುತ್ತಾ, ಮಧ್ಯೆ ಮಧ್ಯೆ ನಗೆ ತಾರದ  ಜೋಕುಗಳನ್ನು ಉರುಳಿಸುತ್ತಾ, ಆದಷ್ಟು ಮೊಬೈಲ್ ಫೋನಿನಲ್ಲಿ ಅದ್ದಿದ ಮುಖಗಳನ್ನು ಹೊರ ತೆರೆಯಲು ಪ್ರಯತ್ನಿಸುತ್ತಿದ್ದಳು. ಕಡೆಗೊಮ್ಮೆ ಬಸ್ಸು ನಿಧಾನಿಸಿ ನಿಂತಾಗ, ಎಲ್ಲರನ್ನು ಕೆಳಗಿಳಿಸಿ, ಪಕ್ಕದ ಕಟ್ಟೆಯ ಮೇಲೆ ನಿಂತು, ಕೆಳಗೆ ಹರಿಯುತ್ತಿದ್ದ ತಮೆಗಾ ನದಿಯ ಪರಿಚಯವನ್ನೂ, ಗೋನ್ಸಾಲರ ಇಗರ್ಜಿಯನ್ನೂ ತೋರಿಸಿ, ಮುಕ್ಕಾಲು ಘಂಟೆಯೊಳಗೆ ಎಲ್ಲ ಸುತ್ತಿ, ಫೋಟೋದಲ್ಲಿ ಕಟ್ಟುವಷ್ಟು ಕಟ್ಟಿ, ಮತ್ತೆ ಬಸ್ಸಿನಲ್ಲಿರಬೇಕೆಂದು ಅಪ್ಪಣಿಸಿದಳು. ಅಷ್ಟಕ್ಕೇ ನಿಲ್ಲಿಸದೆ, ತನ್ನ ಮೊಬೈಲಿನಲ್ಲಿದ್ದ ಫೋಟೋವೊಂದನ್ನು ಗುಂಪಿನ ಎಲ್ಲ ಅಡಲ್ಟಿಗರಿಗೆ ತೋರಿಸುತ್ತ, ಅವರ ನಾಚಿಕೆಯ, ಆಶರ್ಯದ ನಗುವಿಗೆ ತಾನು ನಗುತ್ತ, ಅದೊಂದು ಜೋಕು ಎಂದಳು. ಅವಳು ತೋರಿಸಿದ ಆ ಫೋಟೋದ ಮರ್ಮ ಮತ್ತು ಅದರ ಹಿಂದಿನ ಜೋಕು ಆಗ ಅರ್ಥವಾಗಿರಲಿಲ್ಲ. ಸುಮ್ಮನೆ ನಕ್ಕೆವು. 

ಅನಬೆಲ್ಲ ಹೇಳಿದಂತೆ, ಆ ಹಳೆಯ ಬ್ರಿಡ್ಜಿನತ್ತ ನಡೆದು, ಅದರ ಮೇಲೆ ನಿಂತು ಆಚೆ ಈಚೆಯ ಕಟ್ಟಡಗಳನ್ನು, ಕೆಳಗೆ ಹರಿಯುತ್ತಿರುವ ನದಿಯ ಹರಿವನ್ನೂ ನೋಡುತ್ತಾ, ಗೊನ್ಸಾಲರು ತಮ್ಮ ಪವಾಡದಲ್ಲಿ ಮೊದಲು ಕಟ್ಟಿದ, ಆನಂತರ  ೧೭-೧೮ ಶತಮಾನದಲ್ಲಿ ಮತ್ತೆ ಹೊಸದಾಗಿ ಕಟ್ಟಿದ, ನೆಪೋಲಿಯನ್ನಿನ ಕಾಲದಲ್ಲಿ ನಡೆದ ಹೋರಾಟದಲ್ಲಿ ಸಿಡಿದ ಗುಂಡುಗಳ ಕಲೆಯನ್ನ ಇನ್ನೂ ಸಾಕಿರುವ ಆ ಬ್ರಿಡ್ಜನ್ನು ದಾಟಿ, ಅಮರಾಂತೆಯ ಸಂತರ ಇಗರ್ಜಿಯತ್ತ ನಡೆದ ನಮಗೆ, ಮೊದಲು ಕರೆದದ್ದು ಅಲ್ಲಿನ ಕಾರ್ ಪಾರ್ಕಿನ ಪಕ್ಕದ ಸಣ್ಣ ತೋಟದಲ್ಲಿ ದೊಡ್ಡದಾಗಿ ಇಂಗ್ಲಿಷ್ ಅಕ್ಷರಗಳಲ್ಲಿ ನಿಲ್ಲಿಸಿಟ್ಟ AMARANTE. ಬಣ್ಣ ಬಣ್ಣದ ಆ ದೊಡ್ಡ ಅಕ್ಷರಗಳ ಮುಂದೆ ನಿಂತು ಫೋಟೋದಲ್ಲಿ ನಮ್ಮ ಜೊತೆ ಅದನ್ನು ಸೇರಿಸಿ ಹೊರನಡೆಯುವಾಗ, ಪಕ್ಕದಲ್ಲೇ ಚಪ್ಪರವೊಂದರ ಕೆಳಗೆ ಒಂದಿಷ್ಟು ಸಾಮಾನುಗಳನ್ನು ಮಾರುತ್ತಿದ್ದ, ಆ ಕಾರ್ ಪಾರ್ಕಿನ ಒಂದೇ ಅಂಗಡಿಯತ್ತ, ಅಲ್ಲಿನ 'ವಿಶಿಷ್ಣ' ಆಕಾರದ, ಪ್ಲಾಸ್ಟಿಕಿನಲ್ಲಿ ಸುತ್ತಿಟ್ಟ ವಸ್ತುಗಳನ್ನ ಏನೆಂಬ ಕುತೂಹಲದಲ್ಲಿ ನೋಡಲು ಹತ್ತಿರ ಹೋದೆವು. ಅಲ್ಲಿದ್ದದ್ದು, ಅನಬೆಲ್ಲ ಫೋನಿನಲ್ಲಿ ಜೋಕೆಂದು ತೋರಿಸಿದ ಆಕಾರದ ಸಣ್ಣ, ದೊಡ್ಡ, ಗಟ್ಟಿ, ಮತ್ತು ಮೆತ್ತನೆಯ ವೆರೈಟಿಯ ಕೇಕುಗಳು. 

ಆ ಕೇಕುಗಳ ದರ್ಶನದಿಂದ ಮನಸ್ಸಿನಲ್ಲಿ ಕುಣಿಯುತ್ತ ಮುಖದಲ್ಲಿ ಹೊರಬರಲು ಯತ್ನಿಸುತ್ತಿದ್ದ ಚೇಷ್ಟೆಯ ಹುಡುಗುತನವನ್ನ ಸ್ವಲ್ಪ ಬದಿಗಿಟ್ಟು, ಆ ಅಂಗಡಿಯ ಒಡತಿಗೆ, ಆ ಕೇಕುಗಳ ಆಕಾರದ ಹಿಂದಿನ ಕಥೆ ಏನೆಂದು ಕೇಳಿದೆವು. ನಮ್ಮ ಇಂಗ್ಲೀಷು ಆಕೆಯ ಪೋರ್ಚುಗೀಸು ನಡುವೆ ಯಾವುದೇ ಸೇತುವೆ ಇಲ್ಲದ ಕಾರಣ, ಕೈ ಸನ್ನೆಯಲ್ಲಿ ಒಂದು ಕೇಕಿನ ದುಡ್ಡು ಕೇಳಿ, ಕೊಂಡು, ಸಕ್ಕರೆಯ ಐಸಿಂಗಿನ ಆ ಕೇಕಿನ ಪ್ಲಾಸ್ಟಿಕಿನ ಬಂಧನದಿಂದ ಹೊರ ತಂದು, ತರತರದಲ್ಲಿ ಕೈಯಲ್ಲಿ ಹಿಡಿದು, ಫೋಟೋ ಮತ್ತು ವಿಡಿಯೋಗಳಲ್ಲಿ ಅದನ್ನು ವರ್ಣಿಸಿ, ಆಪ್ತ ಗೆಳೆಯರ ವಾಟ್ಸಪ್ಪ್ ಗುಂಪಿಗೆ ಆ  ಕೇಕನ್ನು ವಿಡಿಯೋದ ಮೂಲಕ ಅರ್ಪಿಸಿ, ಮುನ್ನಡೆದೆವು. ಆಗ ಮಾತೆಲ್ಲ ಆ ಕೇಕು ಹುಟ್ಟಿದ, ಮತ್ತೆ ಹೀಗೆ ದಿನ ದಿನ ಅಮರಾಂತೆಯ ಹಲವು ಓವನ್ನು ಗಳಲ್ಲಿ ಬೇಯುತ್ತಿರುವ ಅದರ ಅವತಾರಗಳ ಹಿಂದಿನ ಕಾರಣಕ್ಕೆ ನಮ್ಮ ಊಹೆಯ ಪಟ್ಟಿ. 

ಹಾಗೆ ಪಕ್ಕದ ಇಗರ್ಜಿಯ ಮುಂದಿಷ್ಟು ಭಂಗಿಗಳಲ್ಲಿ ನಮ್ಮನ್ನು ಫ್ರೇಮಿಸಿಕೊಂಡು, ಬ್ರಿಡ್ಜಿನ ಮೊದಲ ಬದಿಗೆ ಮರಳಿ, ಪಕ್ಕದ ಬೀದಿಯಲ್ಲಿ ಕಾಪಿಯ ಬಾಯಾರಿಕೆಗೆ ಹೊರಟ ನಮಗೆ ಮತ್ತೆ ಅಲ್ಲಿನ ಟೂರಿಸ್ಟ್ ಅಂಗಡಿಗಳ ಮ್ಯಾಗ್ನೆಟ್ಟುಗಳಲ್ಲಿ, ಹಾಗೆಯೇ ಆ ಬೀದಿಯ ಕೆಲವು ಬೇಕರಿಗಳಲ್ಲಿ ಮತ್ತದೇ ಕೇಕಿನ ದರ್ಶನ. ಬೇಕರಿಯ ಕೇಕುಗಳಿಗೆ ಸಕ್ಕರೆಯ ಕವಚವಿದ್ದರೆ, ಮ್ಯಾಗ್ನೆಟಿನ ಚಿತ್ರಗಳ ಕೇಕಿನ ಮೇಲೆ ಒಂದು ಹಲ್ಲಿ. ಆ ಮ್ಯಾಗ್ನೆಟ್ಟನ್ನು ಕೊಂಡುಕೊಳ್ಳುವಷ್ಟು ಧೈರ್ಯ ಬರಲಿಲ್ಲ. ಯಾವತ್ತಿನಂತೆ ಮೊಬೈಲಿನ ಕ್ಯಾಮರಾಕ್ಕೆ ಸೇರಿಸಿಕೊಂಡೆವಷ್ಟೇ. ಅಷ್ಟರಲ್ಲಿ ಸಮಯದ ಮುಳ್ಳು ಅನಬೆಲ್ಲ ಹಾಕಿದ ಗೆರೆ ಮುಟ್ತುತ್ತಿದ್ದರಿಂದ, ಅವಸರದಲ್ಲಿ ಕಾಪಿ ಕಪ್ಪು ಹಿಡಿದು ಬಸ್ಸಿನತ್ತ ಓಡಿದಂತೆ ನಡೆದೆವು. 

ಬಸ್ಸಿನ ಬಾಗಿಲಿನ ಪಕ್ಕ ನಿಂತಿದ್ದ ಅನಬೆಲ್ಲಳ ಹತ್ತಿರ ಅಮರಾಂತೆಯ ಕೇಕಿನ ಕಥೆ ಮತ್ತೆ ಕೇಳಲು, ಅವಳು ಅದರ ಹೆಸರು ಸಂತ ಗೊನ್ಸಾಲಿನ್ಹೋ ಎಂದೂ, ಹಾಗೆಂದರೆ 'ದಿ ಲಿಟಲ್ ಗೋನ್ಸಾಲ್' ಎಂದರ್ಥವೆಂದೂ, ಮತ್ತೆ ಒಂದು ಕಾಲದಲ್ಲಿ ಅತಿ ಪ್ರಬಲವಾಗಿದ್ದ ಚರ್ಚಿನ ಹಿಡಿತದ ವಿರುದ್ಧ ಯಾವಾಗಲೋ ಸಿಡಿದೆದ್ದ ರೆಬೆಲಿಗರು, ಅವರ ಕೋಪ ಮತ್ತೆ ವ್ಯಂಗ್ಯವನ್ನು ವ್ಯಕ್ತಪಡಿಸಲು ಮೊದಮೊದಲು ಈ ಕೇಕನ್ನು ಬೇಯಿಸಿದರೆಂದೂ, ಹಾಗೆ ಬರುಬರುತ್ತ ಅದು ಅಮರಾಂತೆಯ ಜೋಕಿನ  ಕೇಕಾಗಿ ಬಿಟ್ಟಿದೆ ಎಂದೆಲ್ಲ ವಿವರಿಸಿದಳು. ಅಷ್ಟಕ್ಕೇ ನಿಲ್ಲದೆ, ಆ ಕೇಕನ್ನು ತಿಂದವರಿಗೆ ಅವರಿಷ್ಟದ 'ಲವ್' ಸಿಗುತ್ತದೆ ಎಂದು ಜೋರಾದ ನಗುವಿನಲ್ಲಿ ಹೇಳುತ್ತಾ ಬಸ್ಸು ಹೊರಡಿಸಿದಳು. 

ಅವಳ ವಿವರಣೆ, ಸಮಾಜದ ಪ್ರಬುದ್ಧತೆಗೆ ಅನುಗುಣವಾಗಿ ಹೋರಾಟದ ಮಜಲುಗಳು ವ್ಯಕ್ತವಾಗುವ ರೀತಿ, ಅವುಗಳ ಹಿಂದಿನ ಪ್ರೇರಣೆ ಮತ್ತು ಧೈರ್ಯವನ್ನು ಮೆಚ್ಚುತ್ತ, ವಿಮರ್ಶಿಸುತ್ತಾ, ನೆನಪಿನ ಕೊಟ್ಟೆಯಲ್ಲಿ ಬೇರೆ ಬೇರೆ ರೀತಿಯಲ್ಲಿ ಅಮರಾಂತೆಯನ್ನ ಮಡಿಚಿಡುತ್ತಿದ್ದವು. ಅಮರಾಂತೆಯನ್ನು ದಾಟಿದ ಮೇಲೂ ತಣಿಯದ ಕುತೂಹಲದಲ್ಲಿ ಹುಡುಕಿದ ವಿಕಿಪಿಡಿಯಾದಲ್ಲೂ ಅನಬೆಲ್ಲ ಕಥೆಯಷ್ಟು ವಿವರಗಳಿರಲಿಲ್ಲ. ಆದರೆ, 'ಸಂತ ಗೊನ್ಸಾಲಿನ್ಹೋ'  ಚಿತ್ರವಿದೆ ಅಲ್ಲಿ, ಬೇಕಾದರೆ, ಸಣ್ಣ ಮಕ್ಕಳು ಪಕ್ಕ ಇಲ್ಲದಿದ್ದಾಗ ಸೈಲೆಂಟಾಗಿ ನೋಡಿ ನಮಸ್ಕರಿಸಿಬಿಡಿ.