ಏನಾದರೂ ಬರೆಯಬೇಕು, ಬರೆಯಲೇಬೇಕು ಎಂದು ಪಟ್ಟಿ ಮಾಡಿ ಇಟ್ಟುಕೊಂಡ, ಅರ್ಧ ಬರೆದು ಡ್ರಾಫ್ಟ್ನಲ್ಲಿ ಹೆಪ್ಪು ಹಾಕಿಟ್ಟ ಲೇಖನಗಳನ್ನು ವಾರಕ್ಕೊಂದರಂತೆ ಬರೆದರೂ ಸಾಕು, ಅದೆಷ್ಟು ಪುಸ್ತಕಗಳಿಗೆ ಸರಕಾಗುತ್ತದೆಯೋ ಎಂಬ ಆಲೋಚನೆಯನ್ನು ಮನಸ್ಸಿನಲ್ಲೇ ಮಥಿಸುತ್ತ, ಕೈಗೆ ಸಿಗದ ಕನಸಿನ ನವನೀತ ಕೂಡಿಟ್ಟು, ಅದು ಹೇಳಹೆಸರಿಲ್ಲದೆ ಕರಗಿಯೂ ಹೋಗಿದೆ.
ಯಾಕೆ ಬರೆಯಲು ಸಾಧ್ಯವಾಗುತ್ತಿಲ್ಲ? ಉತ್ತರ ನನ್ನ ಬಳಿಯೂ ಇಲ್ಲ. ರಾತ್ರಿ ಹಾಸಿಗೆಗೆ ಬೆನ್ನು ತಾಗಿಸುತ್ತಲೇ ಒಂದು ಜಾದೂ ಘಟಿಸುತ್ತದೆ. ಕಣ್ಣು ಸೀಲಿಂಗ್ ನೋಡುತ್ತಲೇ ಮನಸ್ಸು ಆ ಮಂದಗತ್ತಲಿನಲ್ಲೇ ಸ್ಪುಟವಾಗಿ ಬರೆಯಲು ಶುರುಮಾಡುತ್ತದೆ.
ಛೇ! ಎಷ್ಟು ಚಂದದ ಸಾಲು ಇದು, ನನ್ನ ದೃಷ್ಟಿಯೇ ತಾಕುವಷ್ಟು ಚಂದದ ವಿಷಯ ಮಂಡನೆ. ಆಗಿದ್ದಾಗಲಿ, ಈಗಲೇ ಎದ್ದು ಕುಳಿತು ಸೀಲಿಂಗ್ ಮೇಲೆ ಗೀಚಿದ್ದನ್ನು ಪೇಪರ್ ಮೇಲೋ ಕಿಲೀಮಣೆಯನ್ನೇ ತಟ್ಟುತ್ತ ಕುಟ್ಟುತ್ತ ಬರೆದೇ ಬಿಡೋಣ ಅಂತ ಅನಿಸುತ್ತದೆ. ಆದರೂ ಮತ್ತದೇ ಉದಾಸೀನದ ಅಪರಾವತಾರದಂತಿರುವ ಅಮಿತೆಯ ಮನಸು, `ಅಯ್ಯೋ ಮಲ್ಕೊಳಮ್ಮ ಸುಮ್ಮನೆ ಸಾಕು, ನಾಳೆ ಸಾವಿರ ಕೆಲಸ ಇದೆ` ಅಂತ ಲಾಲಿಯಂತೆ ರಾಗವಾಗಿ ಹೇಳಿ ಹೇಳಿ ಮಲಗುವಂತೆ ಮಾಡಿಬಿಡುತ್ತದೆ. ನಿದ್ದೆ ಬಂದವರಿಗೆ ಹಾಸಿಗೆ ತೋರಿಸುವುದು ಅನ್ನುವುದು ಇದಕ್ಕೇ ಇರಬೇಕು.
ಈ ವಾರ `ಅನಿವಾಸಿ` ಸಂಚಿಕೆಗೆ ಬರೆಯಬೇಕು, ಏನಿದೆ ಸರಕು? ಎಂಬ ರಿಮೈಂಡರ್ ಶೈಲಿಯ ಪ್ರಶ್ನೆ ಮನಸ್ಸಿನಲ್ಲಿ ಬರುತ್ತಲೇ ಇತ್ತು. ಬರೆಯಲು ಒಲ್ಲದ ಮನಸ್ಸು, ಅದು-ಇದು ಕಥೆ ಹಾರಿಸುತ್ತ ಒಮ್ಮೆಲೇ, `ಅಮಿತಾ, ನೀನು ಅಡುಗೆ ಮಾಡಿಲ್ಲ ಇನ್ನೂ…` ಹಾಗೆಂದು ನೆನಪಿಸಿತು. ಏನು ಬರೆಯಲಿ? ಎಂಬ ಪ್ರಶ್ನೆ ಹೋಗಿ, ಏನಡುಗೆ ಮಾಡಲಿ ಎಂಬ ಪ್ರಶ್ನೆ ಕಾಡತೊಡಗಿತು.
ಇಂದು ಮಕ್ಕಳು, ಮನೆಯವರು ಯಾರೂ ಇಲ್ಲ. ಒಬ್ಬಳಿಗೆಂದು ಏನು ಮಾಡೋದು? ಎಂಬೆಲ್ಲ ಸಬೂಬು ಹೇಳಿ ಏನಾದರೊಂದು ಮಾಡಿ ತಿಂದು ಮುಗಿಸುವ ಜೀವವಲ್ಲ ನನ್ನದು. ಮನೆಯಲ್ಲಿ ಯಾರೂ ಇಲ್ಲ ಅಂತಾದರೆ ಅಮಿತಾಳಿಗೆ ಇಷ್ಟವಿರುವ, ಮನೆಯವರು ಮಕ್ಕಳು ಅಷ್ಟೇನೂ ಇಷ್ಟಪಡದ ಅಡುಗೆಗಳನ್ನು, ತರಹೇವಾರಿ ಪಲ್ಯ, ಚಟ್ನಿ, ಮತ್ತೊಂದು-ಇನ್ನೊಂದು ಮಾಡಿ ಅಚ್ಚುಕಟ್ಟಾಗಿ ತಟ್ಟೆಯಲ್ಲಿ ರಂಗೋಲಿಯಂತೆ ಜೋಡಿಸಿ, ಒಂದೆರಡು ಫೋಟೋ ತೆಗೆದು, ಪ್ರತಿ ತುತ್ತು ತಿನ್ನುವಾಗ ಅಜ್ಜಿ, ಅಮ್ಮ, ದೊಡ್ಡಮ್ಮ, ಚಿಕ್ಕಮ್ಮ, ಸೋದರತ್ತೆಯರನ್ನ ನೆನಪು ಮಾಡಿಕೊಳ್ಳುತ್ತ, ಅಡುಗೆ-ಊಟದ ಕುರಿತು ಈ ಪರಿ ಪ್ರೀತಿಯನ್ನು ನನ್ನಲ್ಲಿ ತುಂಬಿದ ಭಗವಂತನಿಗೆ ಥ್ಯಾಂಕ್ಸ್ ಹೇಳುತ್ತಾ ನಿರುಮ್ಮಳವಾಗಿ ಊಟ ಮಾಡುತ್ತೇನೆ. 
ಇವತ್ತು ಅಂಥದ್ದೇ ಒಂದು ಸುದಿನ. ಆದರೆ ಇವತ್ತು ಮನಸ್ಸು, ನಾಲಿಗೆ, ಬುದ್ಧಿ, ಹೃದಯ ಎಲ್ಲರ ಬಯಕೆ ಒಂದೇ! ಮೊಸರು ಬುತ್ತಿ. ಇದು ಸರ್ವಸಮ್ಮತವಾಗಿ ನಿರ್ಧಾರವಾದ ಅಡುಗೆ. ಆದ್ದರಿಂದ ಅಡುಗೆಮನೆಯಲ್ಲಿಯೂ ನನ್ನೊಳಗೂ ಒಂದು ಬಗೆಯ ಉಲ್ಲಾಸ ತುಂಬಿ, ಖುಷಿಯಲ್ಲಿ ಹಾಡುಗಳು ತನ್ನಿಂದತಾನೇ ಒಂದೊಂದಾಗಿ ಅಪ್ರಯತ್ನಪೂರ್ವಕವಾಗಿ ಹೊಮ್ಮತೊಡಗಿದವು. ಅಕ್ಕಿ ತೊಳೆದು ಒಂದಷ್ಟು ಹೆಚ್ಚಿಗೆಯೇ ನೀರಿಟ್ಟು ಮಿಜ್ಜಿ ಅನ್ನದ ತಯಾರಿ ಶುರುಮಾಡಿದೆ. ಅದರ ಜೊತೆಗೆ ಒಂದಷ್ಟು ಮಜ್ಜಿಗೆ ಮೆಣಸು, ಬೆಳ್ಳುಳ್ಳಿ ಸಂಡಿಗೆ, ಹುರುಳಿ ಹಪ್ಪಳ ಹುರಿದು ಗಾಳಿಯಾಡದ ಡಬ್ಬದಲ್ಲಿ ಪೇರಿಸಿದೆ.
ಕೆಂಪು ಈರುಳ್ಳಿ, ಹಸಿಮೆಣಸು, ಕೊತ್ತಂಬರಿಸೊಪ್ಪು ಸಣ್ಣಗೆ ಹೆಚ್ಚಿಟ್ಟುಕೊಂಡು, ಬೆಳ್ಳುಳ್ಳಿ ಮತ್ತು ಶುಂಠಿಯನ್ನು ಕಲ್ಬತ್ತಿನಲ್ಲಿ ಜಜ್ಜಿಕೊಂಡೆ. ಅನ್ನ ಆಗಲು ಇನ್ನೂ ಸಮಯವಿತ್ತು. ಮತ್ತೇನು ಮಾಡೋದು? ನಾನು ನನ್ನೊಂದಿಗೇ ಹರಟೆ ಹೊಡೆಯಲು ಶುರು ಮಾಡಿದೆ. ಈ ಮೊಸರನ್ನ ಎಂಬುದು ಅದೆಷ್ಟು ಸರಳ ಅಲ್ವಾ? ಜೀವಕ್ಕೂ ಹಿತ ಮಾಡಲೂ ಸುಲಭ. ಹಾಗೆ ನೋಡಿದರೆ ಮೊಸರನ್ನ ಆಧ್ಯಾತ್ಮದ ತತ್ವವನ್ನು ತಟ್ಟೆಯಲ್ಲಿದ್ದೇ ಮೌನವಾಗಿಯೇ ಬೋಧಿಸುತ್ತದೆ.
`ಅಯ್ಯೋ ಮೊಸರನ್ನವಾ? ಮಕ್ಕಳೂ ಕಲಸಬಹುದು.` ಹಾಗಾದರೆ ಎಷ್ಟೊಂದು ಸರಳ ಮಸರನ್ನ ಇರುವಾಗ ನಾವ್ಯಾಕೆ ಸಂಕೀರ್ಣತೆಯ ಹಿಂದೆ ಬಿದ್ದು ಒದ್ದಾಡುತ್ತೇವೆ? ನಿಜಕ್ಕೂ ಈ ಜೀವನಕ್ಕೆ ಬೇಕಾಗಿರೋದು ಒಂದು ತಟ್ಟೆ ಮೊಸರನ್ನ ಅಷ್ಟೇ! ಹೀಗೆಲ್ಲ ನನ್ನ ತಲೆ ಮಾತಾ ಅಮಿತಾನಂದಮಯಿಯಂತೆ ಪ್ರವಚನ ಕೊಡುತ್ತಿರುವಾಗ, ನಾನು ಎದ್ದು ಅನ್ನ ಬೆಂದಿದೆ ಹೇಗೆ ಬೇಕೋ ಹಾಗೇ ಎಂದು ನನ್ನಷ್ಟಕ್ಕೆ ಖುಷಿ ಪಟ್ಟೆ.
ಈ ಬುತ್ತಿ ಅನ್ನ ಉಳಿದ ಮೊಸರನ್ನದ ರೀತಿಯಲ್ಲ. ಉತ್ತರ ಕರ್ನಾಟಕದಲ್ಲಿ ಹುಟ್ಟಿ ಬೆಳೆದ ಮಂದಿಗೆ, ಅಥವಾ ಉತ್ತರ ಕರ್ನಾಟಕ ಭಾಗದ ಆತ್ಮೀಯ ಸ್ನೇಹಿತರು ನಿಮಗಿದ್ದರೆ ಮಾತ್ರ ಈ ವಿಧದ ಮೊಸರನ್ನದ ರುಚಿ ನಿಮಗೆ ಗೊತ್ತಿರುತ್ತದೆ ಅಥವಾ ದಕ್ಕಿರುತ್ತದೆ.
ಮೆತ್ತಗೆ ಬೇಯಿಸಿಕೊಂಡ ಅನ್ನ, ಕೆನೆ ಮೊಸರು, ಒಂಚೂರು ಹಾಲು, ಉಪ್ಪು, ಹೆಚ್ಚಿಕೊಂಡ ಈರುಳ್ಳಿ, ಹಸಿಮೆಣಸು, ಜಜ್ಜಿಕೊಂಡ ಬೆಳ್ಳುಳ್ಳಿ ಮತ್ತು ಶುಂಠಿ ಇಷ್ಟನ್ನೂ ಸೇರಿಸಿ ಅನ್ನವನ್ನು ನುರಿಯುತ್ತ, ಉಂಡೆ ಕಟ್ಟುವ ಹದಕ್ಕೆ ಬಂದಾಗ ರಾಗಿ ಮುದ್ದೆಯ ಅಳತೆಯ ಉಂಡೆ ಕಟ್ಟಬೇಕು.
ಈ ಬುತ್ತಿಯನ್ನ ಮದುವೆಯ ಮೊದಲು, ಮದುವೆಯ ನಂತರ, ಶುಭಕಾರ್ಯಗಳು ಇದ್ದಾಗ ನೆಂಟರ ಮನೆಗೆ, ಬೀಗರ ಮನೆಗೆ ರೊಟ್ಟಿ, ವಿಧವಿಧದ ಪಲ್ಯ, ಚಟ್ನಿ, ಪುಡಿ, ಸಿಹಿ, ಝುಣುಕದ ವಡಿ, ಉಂಡಿ, ಕರ್ಜಿಕಾಯಿ, ಕರಿದ ಸಂಡಿಗೆ, ವಡೆ, ಹಪ್ಪಳಗಳೊಂದಿಗೆ ಕಳಿಸಿಕೊಡಲಾಗುತ್ತದೆ. ಹಾಗೆ ಆ ಊರಿನಿಂದ ಬಂದು ಸೇರಿದ ಬುತ್ತಿಯನ್ನು ಈ ಊರಿನ ಪರಿಚಿತ, ಆತ್ಮೀಯರೊಂದಿಗೆ ಹಂಚಿಕೊಂಡು ಸಂಭ್ರಮಿಸಿದಾಗಲೇ ಆ ಊಟಕ್ಕೊಂದು ಮೆರಗು ಬರುವುದು.
ನನ್ನ ತವರುಮನೆ ಮುಂಡಗೋಡದಲ್ಲಿ ನಮಗೆ ಎಲ್ಲರೂ ಪರಿಚಿತರಾಗಿರುವುದಕ್ಕೆ ಇಂಥ ಅಸಂಖ್ಯಾತ ಬುತ್ತಿ ಊಟಗಳನ್ನು ಆಸ್ವಾಧಿಸಿದ್ದೇನೆ. `ಇನ್ನೂ ಬುತ್ತಿ ತಂದುಕೊಟ್ಟಿಲ್ವೇ?` ಎಂದು ಕಾತರತೆಯಿಂದ ಕಾದು ಕುಳಿತದ್ದು ಇದೆ. ಒಂದು ರೀತಿಯಲ್ಲಿ `ಅಜ್ಜಿಗೆ ಅಜ್ಜನ ಚಿಂತೆಯಾದರೆ ಮೊಮ್ಮಗಳಿಗೆ ಕಜ್ಜಾಯದ ಚಿಂತೆ` ಎಂಬ ಗಾದೆಮಾತು ನನಗೆಂದೇ ರಚನೆಯಾಗಿದ್ದು ಎಂದು ಎಷ್ಟೋ ಸಲ ಅನಿಸಿದ್ದಿದೆ.
ಆದರೆ ನನ್ನ ಅಮ್ಮನಿಗೆ ಮಾತ್ರ ಈ ಬುತ್ತಿ ಅನ್ನ ಇಷ್ಟವಾಗದು. ಒಂದು, ಅದರಲ್ಲಿ ಬೆಳ್ಳುಳ್ಳಿ ಹಾಕುತ್ತಾರೆ ಎಂದು. ಮತ್ತೊಂದು, ಅನ್ನದ ಉಂಡೆ ಕಟ್ಟುವುದು ಪಿಂಡ ಇಡುವಾಗ ಮಾತ್ರ ಎಂಬುದು ಅವಿಭಜಿತ ದಕ್ಷಿಣ ಕನ್ನಡ ಮೂಲದ ಅಮ್ಮನ ಬಲವಾದ ನಂಬಿಕೆ. ಅದಕ್ಕೆ ಉಂಡೆ ಕಟ್ಟಿರುವ ಮೊಸರು ಬುತ್ತಿ ಅಮ್ಮ ತಿನ್ನುವುದಿಲ್ಲ.
ಹೇಗೂ ಮೊಸರನ್ನದ ಶ್ರುತಿ ತೀಡಿಯಾಗಿದೆ. ಇನ್ನೊಂದಿಷ್ಟು ಅದರ ಬಗ್ಗೆಯೇ ಹೇಳಿ ಬಿಡುವೆ. ಮೊಸರನ್ನ ಎಂಬ ಹೆಸರು ಒಂದೇ ಆದರೂ ಪ್ರಕಾರಗಳು ಹಲವು.
ಬುತ್ತಿ ಅನ್ನದ ನಂತರ ನನಗೆ ನೆನಪಿರುವ ಮತ್ತೊಂದು ಮೊಸರನ್ನದ ರುಚಿ ಎಂದರೆ ಆಂಧ್ರ ಮೂಲದ ಮಂದಿ ಮಾಡುವ ಉದ್ದಿನಬೇಳೆ, ಕಡಲೆಬೇಳೆ, ಶುಂಠಿ, ಚೂರೇ ಚೂರು ಅರಿಶಿನ ಹಾಕಿ ಚಂದದ ಒಗ್ಗರಣೆ ಕೊಟ್ಟು, ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು ಹಾಕಿ ಮಾಡಿದ, ಬಾಯಲ್ಲಿಟ್ಟರೆ ಕರಗಿಯೇ ಹೋಯಿತು ಅನ್ನುವಷ್ಟು ಹಗುರ-ಹಗುರವಾದ ಮೊಸರನ್ನ. ಇದರ ರುಚಿ ನೋಡುವ ಅವಕಾಶ ಸಿಕ್ಕಿದ್ದು ಪುಟ್ಟಪರ್ತಿಯಲ್ಲಿ. ಆಹಾ! ಅದೆಂಥ ಚಂದದ ಅನುಭೂತಿ ಅದು!
ನನ್ನ ಹೈಸ್ಕೂಲ್ ದಿನಗಳಲ್ಲಿ ಮೆತ್ತಗೆ ಮಾತನಾಡುವ, ಅಷ್ಟೇ ಚುರುಕು ಹುಡುಗಿ ಒಬ್ಬಳಿದ್ದಳು. ಆಕೆಯ ಹೆಸರು ನೇತ್ರಾವತಿ. ನಾವು ಸುಮಾರು ಎಂಟು ಸ್ನೇಹಿತೆಯರು ಒಟ್ಟಿಗೆ ಊಟಕ್ಕೆ ಕುಳಿತುಕೊಳ್ಳುತ್ತಿದ್ದೆವು. ಊಟವನ್ನು ಹಂಚಿಕೊಳ್ಳುತ್ತಿದ್ದೆವು ಕೂಡ. ನೇತ್ರಾವತಿಯ ಅಮ್ಮ ಕಟ್ಟಿ ಕಳಿಸುತ್ತಿದ್ದ ಆ ಮೊಸರನ್ನ ತುಂಬಾ ವಿಭಿನ್ನವಾಗಿತ್ತು. ಆಕೆ ಮೊಸರನ್ನ ತಂದರೆ ಅರ್ಧ ಡಬ್ಬಿ ನನಗೆ ಎಂದು ಫಿಕ್ಸ್ ಆಗಿಬಿಟ್ಟಿತ್ತು. ಆಕೆಯನ್ನು ಕಾಡಿಸಿ ಪೀಡಿಸಿ ಆ ರೆಸಿಪಿಯನ್ನು ನಮ್ಮ ಮಸ್ತಿಷ್ಕದೊಳಗೆ ಸೇರಿಸಿಕೊಳ್ಳಲಾಯಿತು.
ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಂಡು, ಅದಕ್ಕೆ ಹದ ಬಿಸಿಮಾಡಿದ ತೆಂಗಿನ ಎಣ್ಣೆ ಮತ್ತು ರುಚಿಗೆ ಬೇಕಾದಷ್ಟು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ, ಅದಕ್ಕೆ ಮೊಸರು ಬೆರೆಸಿ, ಅದಕ್ಕೆ ತಣಿದ ಅನ್ನವನ್ನು ಬೆರೆಸಿ ಚೆನ್ನಾಗಿ ಕಲಸಿದರೆ ಆಯಿತು. ಇದರ ಜೊತೆ ಒಂದು ಹೋಳು ನಿಂಬೆ ಉಪ್ಪಿನಕಾಯಿ ಇದ್ದರಂತೂ ಊಟ ಸ್ವರ್ಗದ ಹಿತ್ತಲಿನಲ್ಲಿ ಕುಳಿತು ಸವಿದಷ್ಟು ರುಚಿ.
ನಾನು ಯೂನಿವರ್ಸಿಟಿಯಲ್ಲಿ ಇರುವಾಗ ಸೋಷಿಯಾಲಜಿ ಡಿಪಾರ್ಟ್ಮೆಂಟ್ನಲ್ಲಿ ಓದುತ್ತಿದ್ದ ಸರಸ್ವತಿ ಜೋಶಿ ಆತ್ಮೀಯ ಸ್ನೇಹಿತೆಯಾಗಿದ್ದಳು. ಪರೀಕ್ಷೆಗಳಿರುವಾಗ, ಅಥವಾ ಬೇಗನೆ ಕಾಲೇಜ್ ತಲುಪಬೇಕಾದ ದಿನಗಳಲ್ಲಿ ನಾನು ಸರಸ್ವತಿಯ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದೆ. ಅವರ ಅಮ್ಮ ನನ್ನನ್ನು ತಮ್ಮ ಮಗಳಂತೆಯೇ ನೋಡಿಕೊಳ್ಳುತ್ತಿದ್ದರು. ಅವರು ಮಾಡುತ್ತಿದ್ದ ಮೊಸರನ್ನವೂ ವಿಶಿಷ್ಟ. ಅನ್ನ ಮತ್ತು ಮೊಸರನ್ನು ಉಪ್ಪಿನೊಂದಿಗೆ ಹದವಾಗಿ ಕಲಸಿ, ತುಪ್ಪದಲ್ಲಿ ಜಜ್ಜಿದ ಲವಂಗ, ಗೋಡಂಬಿ ಮತ್ತು ಒಣದ್ರಾಕ್ಷಿಯನ್ನು ಹದವಾಗಿ ತಾಳ್ಮೆಯಿಂದ ಹುರಿದು ಅನ್ನಕ್ಕೆ ಒಗ್ಗರಣೆ ಕೊಡುತ್ತಿದ್ದರು. ತುಪ್ಪದಲ್ಲಿ ಕರಿದ-ಹುರಿದ ಆ ಲವಂಗ ಹಲ್ಲಿಗೆ ಸಿಕ್ಕಾಗ `ಕುರ್ರುಮ್` ಎಂದು ನಮಗಷ್ಟೇ ಕೇಳುವ ಹಿತವಾದ ಸದ್ದು, ಒಣದ್ರಾಕ್ಷಿ ಕೊಡುತ್ತಿದ್ದ ಸಿಹಿಯಾದ `ಪಂಚ್`. ಜೊತೆಗೆ ಒಂದಷ್ಟು ಗೋಡಂಬಿಯ ಶ್ರೀಮಂತಿಕೆ! ಆ ಮೊಸರನ್ನದ ಚಂದವೇ ಬೇರೆ.
ಇನ್ನು ಹಣ್ಣುಗಳನ್ನು ಸೇರಿಸಿ ಮೊಸರನ್ನ ಕಲಸಿದ್ದನ್ನು ನಾನು ಮೊದಲು ತಿಂದಿದ್ದು, `Zee Sa Re Ga Ma Pa` ಎಂಬ ರಿಯಾಲಿಟಿ ಶೋಗೆ ಹೋದಾಗ. ಸ್ನೇಹಿತೆ, ಮತ್ತೀಗ ಪ್ರಸಿದ್ಧ ಹಿನ್ನೆಲೆ ಗಾಯಕಿಯಾಗಿರುವ ಶ್ರುತಿ ಪ್ರಶಾಂತ್ ಅವರ ಅಮ್ಮ ಎಲ್ಲ ಸ್ಪರ್ಧಿಗಳಿಗಾಗಿ ತಾವೇ ಅಡುಗೆ ಮಾಡಿಕೊಂಡು ಬಂದು, ಅಕ್ಕರೆಯಿಂದ ಉಣಬಡಿಸಿದಾಗ. ಅಲ್ಲೊಂದು-ಇಲ್ಲೊಂದು ಸಿಗುವ ದ್ರಾಕ್ಷಿ, ಹಾಗೇ ಬಾಯಲ್ಲಿ ಊಟೆಯಾಗುವ ದಾಳಿಂಬೆ ಕಾಳು, ಸಣ್ಣದಾಗಿ ಹೆಚ್ಚಿ ಹಾಕಿದ ಸೇಬು. ಅದಕ್ಕೆಲ್ಲ ಕಿರೀಟವಿಟ್ಟಂತೆ ಇದ್ದ ಸಣ್ಣಗೆ ಹೆಚ್ಚಿದ ಶುಂಠಿ, ಕರಿಬೇವು, ಉದ್ದಿನಬೇಳೆ, ಸಾಸಿವೆ, ಇಂಗಿನ ಒಗ್ಗರಣೆ. ದೇವರೇ, ಅದೆಷ್ಟು ರುಚಿಯಾಗಿತ್ತು! ಜೊತೆಗೆ ಬದನೆಕಾಯಿ ಎಣ್ಣೆಗಾಯಿ ಕೂಡ ಇತ್ತು. 
ಅನ್ನ ಬೇಡ ಅಂದರೆ, ಮೊಸರವಲಕ್ಕಿಯೂ ಅಷ್ಟೇ ರುಚಿ. ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಭವನದ ಪಕ್ಕದಲ್ಲಿ ಆಗೊಂದು ಪುಟ್ಟ ಟೀ ಅಂಗಡಿ ಇತ್ತು. ಬಸಣ್ಣನ ಡಬ್ಬಿ ಅಂಗಡಿ ಅಂತಲೇ ಪ್ರಸಿದ್ಧವದು. ಅವಲಕ್ಕಿ, ಮಂಡಕ್ಕಿ, ಪುಲಾವ್, ಉಪ್ಪಿಟ್ಟು ಚಹಾ ಇಷ್ಟೇ ಅಲ್ಲಿಯ ಮೆನು.
ವಿಶೇಷ ಎಂದರೆ ಬಸಣ್ಣನ ನಗು ಮತ್ತು ಆತ್ಮೀಯತೆ.
ಅಕ್ಕಾರ್ ಬರ್ರಿ ಇವತ್ತೆನ್ ಕೊಡುನು ರಿ? ಪಲಾವ್? ಮೊಸರವಲಕ್ಕಿ? ಅನ್ನುತ್ತಲೇ ನನ್ನ ಉತ್ತರ ಸಿಗುವ ಮೊದಲೇ ಅವಲಕ್ಕಿ ತಟ್ಟೆ ಮುಂದೆ ಇಡುತ್ತಿದ್ದರು.
ಬಿಳಿ ಅವಲಕ್ಕಿ ಮೊಸರು, ಅದರಮೇಲೆ ಒಂದಷ್ಟು ಕೇಸರಿ ಬಣ್ಣದ ಪುಟಾಣಿ ಚಟ್ನಿ ಪುಡಿ. ಅಲ್ಲಲ್ಲಿ ತೇಲುತ್ತಿದ್ದ ಹಸಿಮೆಣಸು, ಕೊತ್ತಂಬರಿ ಸೊಪ್ಪು. ಬಿಸಿಲಿಗೆ ಮೊಸರು ಅವಲಕ್ಕಿ ತುಂಬಿದ ಆ ಕೈಅಗಲದ ತಟ್ಟೆ ಅಮೃತ ಸಮಾನವೆನಿಸುತ್ತಿತ್ತು.
ನಮ್ಮ ಹಳೇ ಮನೆಯ ಮುಂದೆ ನಮ್ಮದೇ ಸಾರಸ್ವತ ಸಮುದಾಯದ ಕುಟುಂಬದವರು ವಾಸವಿದ್ದರು. ಆ ಮನೆಯ ಮಕ್ಕಳು ಕರೆವಂತೆಯೇ ನಾವೂ ಆ ಮನೆಯ ಹಿರಿಯರನ್ನು ಆಯಿ ಮತ್ತು ಪಪ್ಪಾ ಅಂತಲೇ ಕರೆಯುತ್ತಿದ್ದೆವು. ಅವರ ಅಡುಗೆ ನಮ್ಮ ಅಡುಗೆ ಒಂದೇ ರೀತಿ ಆದರೂ ಆಯಿಯ ಕೈಯ ಕೆಲವೊಂದು ಅಡುಗೆಗಳು ಅತ್ಯದ್ಭುತವಾಗಿರುತ್ತಿದ್ದವು. ಅದರಲ್ಲಿ ಒಂದು ಈ ಮೊಸರವಲಕ್ಕಿ. ಅವಲಕ್ಕಿಯ ಪ್ರತಿ ಅಗಳು ಕೂಡ ಇಂಗು, ಕರಿಬೇವು, ಒಣಮೆಣಸಿನ ಒಗ್ಗರಣೆಯ ಘಮದಲ್ಲಿ ಮಿಂದು ಉಪ್ಪು ಒಂಚೂರು ಸಕ್ಕರೆಯನ್ನು ಮಯ್ಯಿಗೆ ಮೆತ್ತಿಕೊಂಡು ತುಳಸಿ ಪೂಜೆಯ ನಂತರ ನೈವೇದ್ಯವಾಗಲು ಕಾಯುತ್ತ ಕುಳಿತಿರುತ್ತಿತ್ತು ಮತ್ತು, ನಾವು ಅದನ್ನು ತಿನ್ನಲು. ನೆನೆಸಿಕೊಂಡರೆ ಈಗಲೂ ಬಾಯಿ ನೀರೂರುತ್ತದೆ.
ಶ್ರೀಲಲಿತಾ ಸಹಸ್ರನಾಮದಲ್ಲಿ ಶ್ರೀಮಾತೆಯನ್ನು ‘ದಧ್ಯನ್ನಾಸಕ್ತಹೃದಯಾ’ ಎಂದು ಕರೆದಿದ್ದಾರೆ, ಜಗನ್ಮಾತೆಯೇ ಮೊಸರನ್ನದಲ್ಲಿ ಆಸಕ್ತಿ ಹೊಂದಿರುವಾಗ, ನಾವೆಲ್ಲ ಮೊಸರನ್ನದ ಮೋಹದಿಂದ ಹೇಗೆ ತಪ್ಪಿಸಿಕೊಂಡೇವು? ನೀವೇ ಹೇಳಿ.
ಈಗಲೂ ಕಣ್ಣು ಮುಚ್ಚಿ ನೆನಪಿಸಿಕೊಂಡರೆ, ಈ ಎಲ್ಲ ದೃಶ್ಯ, ರುಚಿ, ಘಮ ನನ್ನ ಚಿತ್ತಕ್ಕೆ ಬಂದು ಮತ್ತೊಮ್ಮೆ ಈ ಎಲ್ಲ ರಸಾಸ್ವಾಧನೆಗೆ ನನ್ನನ್ನು ಅಣಿಮಾಡುತ್ತವೆ. ಪ್ರಾಯಶಃ ನನಗೆ ಮೊಸರನ್ನ ಕಲಸಿಕೊಟ್ಟ, ಮಾಡಿಕೊಟ್ಟ ಯಾರಿಗೂ ಅದು ಅಂಥಹ ವಿಶೇಷ ತಿನಿಸು, ಖಾದ್ಯ ಆಗಿರಲಿಕ್ಕಿಲ್ಲ. ಆದರೆ ಇವೆಲ್ಲ ರುಚಿಗಳು ನನ್ನ ನೆನಪಿನ ಕೌದಿಯ ರಂಗು-ರಂಗು ಚೌಕಗಳು.
ಸರಿ-ಸರಿ, ನಾನು nostalgic ನಾರೀಮಣಿ ಸಂಪೂರ್ಣವಾಗಿ ಬದಲಾಗುವ ಮುನ್ನ ನನ್ನೇ ನಾನು ಟೈಮ್ ಟ್ರಾವೆಲ್ ಟ್ರ್ಯಾಪ್ನಿಂದ ಈಚೆಗೆ ಕರೆದು, ನನ್ನನ್ನು ಮಾತ್ರವಲ್ಲ ನಿಮ್ಮನ್ನೂ ಬಚಾವು ಮಾಡಿದೆ.
ಇಲ್ಲದಿದ್ದರೆ ನನ್ನ ನೆನಪಿನ ಪರಿಷೆ ನಿಲ್ಲುವುದಿಲ್ಲ. ಯಾಕೆಂದರೆ ಹೀಗೆ ಅದೆಷ್ಟು ಲೆಕ್ಕಕ್ಕೆ ಸಿಗದಷ್ಟು ನೆನಪುಗಳಿವೆ ನನ್ನ ಬಳಿ. ಈ ವಿಷಯದಲ್ಲಿ ಮಾತ್ರ ನಾನು ಜಗತ್ತಿನ ಅತೀ ಶ್ರೀಮಂತರ ಪಟ್ಟಿಯಲ್ಲಿ ಸೇರಿದರೂ ಆಶ್ಚರ್ಯವಿಲ್ಲ.
ನೋಡಿ, ಏನು ಬರೆಯಲಿ ಎಂದು ಶುರುಮಾಡಿದವಳು, ಎಲ್ಲಿ ನಿಲ್ಲಿಸಲಿ ಎಂದು ಅರ್ಥವಾಗದೆ ನೆನಪುಗಳ ಸುರುಳಿಯನ್ನು ಬಿಚ್ಚಿ ಬಿಚ್ಚಿ ಹಾಕಿದ್ದೇನೆ.
ಪ್ರೀತಿಯಿಂದ ಓದಿ. ನಿಮಗೂ ಈ ನೆನಪುಗಳು ತಂಪು ಅನಿಸಿದರೆ, ಅಲ್ಲೆಲ್ಲೋ ಬದುಕಿನ ದಾರಿಯಲ್ಲಿ ಯಾವುದೋ ಮರೆಯಲಾಗದ ರುಚಿಯನ್ನು ನಿಮ್ಮ ನೆನಪಿನ ಬುಟ್ಟಿಗೆ ಪ್ರೀತಿಯಿಂದ ಬುತ್ತಿ ತುಂಬಿ ಕಳಿಸಿದವರು ನೆನಪಾದರೆ ನನ್ನೊಂದಿಗೂ ಹಂಚಿಕೊಳ್ಳಿ.
ವಂದನೆಗಳು,
ಅಮಿತಾ ರವಿಕಿರಣ್
Tag: Kannada
ಸೀಕ್ರೆಟ್ ಸ್ಯಾಂಟಾ
ಅನಿವಾಸಿ ಓದುಗರಿಗೆಲ್ಲ ನಮಸ್ಕಾರ,
ನೀವೆಲ್ಲರೂ spring season ಆಗಮನವನ್ನು ಖುಷಿಯಿಂದ ಬರಮಾಡಿಕೊಂಡು, ತಮ್ಮ ಕುಟುಂಬದೊಡನೆ Easter ರಜೆಯನ್ನು ಕಳೆಯುತ್ತಿರುವ ಈ ಹೊತ್ತಿನಲ್ಲಿ, ವಾರದ ಅನಿವಾಸಿ ಬ್ಲಾಗ್ ಶೀರ್ಷಿಕೆ ನೋಡಿ ಈಗ್ಯಾಕೆ ಇಲ್ಲಿ ಸೀಕ್ರೆಟ್ ಸ್ಯಾಂಟಾ ನೆನಪು ಮಾಡ್ತೀರಿ? ಎಂದು ಮನಸಲ್ಲೇ ಅಂದುಕೊಂಡಿರಬಹುದು.ಆದರೆ ಇದು ಡಿಸೆಂಬರ್ ಸಂಭ್ರಮ ನೆನಪಿಸುವ ಪೋಸ್ಟ್ ಖಂಡಿತ ಅಲ್ಲ. ಈ ವಾರ ಅನಿವಾಸಿಯ ಅಂಗಳಕ್ಕೆ ಹೊಸ ಸದಸ್ಯರೊಬ್ಬರ ಆಗಮನವಾಗುತ್ತಿದೆ ಮತ್ತವರ ಪರಿಚಯ ಮಾಡಿಕೊಡುವ ಅವಕಾಶ ನನಗೆ ಒದಗಿ ಬಂದಿದ್ದು ಬಹಳ ಖುಷಿಯ ಸಂಗತಿ.
ಬನ್ನಿ ಅವರ ಪರಿಚಯ ಮತ್ತು ಅವರು ಬರೆದ ಈ ಕಥೆಯನ್ನು ಓದೋಣ.
– ಅಮಿತಾ ರವಿಕಿರಣ್

ನನ್ನ ಹೆಸರುಪೂರ್ಣಿಮಾ ಭಟ್ಟ ಸಣ್ಣಕೇರಿ. ಸಣ್ಣಕೇರಿ ಎಂಬ ಪುಟಾಣಿ ಗ್ರಾಮ ನನ್ನೂರು. ಪತ್ರಿಕೋದ್ಯಮದಲ್ಲಿ ಪದವಿ. ಕೆಲ ಕಾಲ ಶಿರಸಿಯ ಕಾಲೇಜಿನಲ್ಲಿ ಉಪನ್ಯಾಸಕ ವೃತ್ತಿ. ಪ್ರಜಾವಾಣಿ ಬಳಗದಲ್ಲಿ ಕೆಲವು ವರ್ಷ ಉಪಸಂಪಾದಕಿಯಾಗಿ ಕಾರ್ಯ ನಿರ್ವಹಣೆ.
‘ಕತೆ ಜಾರಿಯಲ್ಲಿರಲಿ’ ಮೊದಲ ಕಥಾ ಸಂಕಲನ. ಇದು ‘೨೦೨೫ರ ಈ ಹೊತ್ತಿಗೆ ಪ್ರಶಸ್ತಿ’ ಪಡೆದುಕೊಂಡಿದೆ. ಕತೆ, ಕವಿತೆ, ಲೇಖನ ಪತ್ರಿಕೆಗಳಲ್ಲಿ-ವಿಶೇಷಾಂಕಗಳಲ್ಲಿ ಅಚ್ಚಾಗಿವೆ.
ಇಂಗ್ಲೆಂಡಿನ ರಾಜಧಾನಿ ಲಂಡನ್ನಿನಲ್ಲಿ ವಾಸ್ತವ್ಯ. ಮ್ಯಾನ್ಯುಫಾಕ್ಚರಿಂಗ್ ಕಂಪನಿಯೊಂದರಲ್ಲಿ ಡೇಟಾ ನಿರ್ವಹಣೆಯ ವೃತ್ತಿ. ಜತೆಗೆ ಬೆಂಗಳೂರಿನಲ್ಲಿನ ಶಾಲಾ ಮಕ್ಕಳಿಗೆ ಆನ್ಲೈನ್ ಕನ್ನಡ ಪಾಠ ನೆಚ್ಚಿನ ಕೆಲಸ.
—————————————————————————————————————————————————–
ಏನ ಹೇಳಲಿ ಈ ಕತೆಯ ಕುರಿತು..?
ಯಾಕೆ ಬರೆದೆ, ಯಾವಾಗ ಬರೆದೆ ಅನ್ನುವುದನ್ನು ಹೇಳತೊಡಗಿದರೆ ಅದು ಇನ್ನೊಂದು ಕಾದಂಬರಿಯಾದೀತು. ಮನಕ್ಕೆ ತುಂಬ ಹತ್ತಿರವಾದ ಕತೆಯಿದು. ಬರೆವ ಸಮಯದಲ್ಲಿ ನಕ್ಕಿದ್ದೇನೆ, ಅಷ್ಟೇ ಬಿಕ್ಕಿದ್ದೇನೆ. ನಿಮಗೆ ಏನನ್ನಿಸಿತು ಅನ್ನುವುದನ್ನು ಹೇಳಿದರೆ, ಈ ಹೊತ್ತಿಗೆ ಅಷ್ಟು ಸಾಕು.
ಸೀಕ್ರೆಟ್ ಸ್ಯಾಂಟಾ
-ಪೂರ್ಣಿಮಾ ಭಟ್ಟ ಸಣ್ಣಕೇರಿ
“ಆರ್ ಯೂ ಔಟ್ ಆಫ್ ಯುವರ್ ಮೈಂಡ್ ಸನ್ನೀ?” ಎಂದು ಸುಮಾರು ಕಿರುಚಿದ ಹಾಗೇ ಮಾತಾಡಿದ ನನ್ನ ಧ್ವನಿ ಇನ್ನೂ ತಾರಕಕ್ಕೇ ಏರತೊಡಗಿತು.
“ಬ್ರೆಸ್ಟ್ ರೀಕನ್ಸ್ಟ್ರಕ್ಶನ್, ನಿಪ್ಪಲ್ ಕನ್ಸ್ಟ್ರಕ್ಶನ್, ಬೂಬ್ಸ್ ಶೇಪಿಂಗ್... ಇನ್ನೂ ಏನಾದರೂ ಉಳಿದಿದ್ಯಾ ಇಲ್ಲಿಗೇ ಮುಗೀತಾ ನಿನ್ನ ಲಿಸ್ಟು?” ನನ್ನ ಇಡೀ ದೇಹ ಥರಗುಡುತ್ತಿತ್ತು. ಈ ಎರಡು ವರ್ಷಗಳಲ್ಲಿ ಇಷ್ಟು ಧ್ವನಿ ಎತ್ತರಿಸಿ ಮಾತನಾಡಿದ್ದು ಇದು ಮೊದಲನೇ ಸಲವಾಗಿತ್ತು. ಒಂದೇ ಧ್ಯಾನದಲ್ಲಿ ತಾಳ್ಮೆ ಮೀರದಹಾಗೆ ತಾಸುಗಟ್ಟಲೇ ಹಿಡಿದ ಭಾರದ ಡಂಬೆಲ್ಸ್ ಸಮತೋಲನ ತಪ್ಪಿ ಕಾಲ ಮೇಲೆ ಬಿದ್ದ ಅನುಭವ ನನಗೆ.
ಮಂಚದ ಬುಡದಲ್ಲಿನ ಹೆಡ್ ಬೋರ್ಡಿಗೆ ಬೆನ್ನು ಆನಿಸಿದ್ದ ಸನ್ಮುಕ್ತಾ ಇವತ್ತು ಒಂದು ತೀರ್ಮಾನ ಆಗಲೇಬೇಕೆಂದು ಅಲ್ಲಿ ಬೇರುಬಿಟ್ಟು ಕುಳಿತಂತೆ ಇದ್ದಳು. ಬಲಗೈ ಎದೆಯ ನಡುವೆ ಹಾದು ಎಡದೋಳನ್ನು ಮೆಲ್ಲನೆ ಸವರುತ್ತಿತ್ತು. ಚಾಚಿದ ಕಾಲಿನ ಬೆರಳುಗಳನ್ನು ಆಗಾಗ ಸುರುಳಿ ಮಾಡಿ ನೆಟ್ಟಗಾಗಿಸುತ್ತಿದ್ದಳು ಅವಳಿಗೇ ಗೊತ್ತಿಲ್ಲದಂತೆ.
“ನನಗೆ ಜಾಸ್ತಿ ಪೊಯಟಿಕಲೀ ಪೊಲಿಟಿಕಲ್ ಆಗಿ ಮಾತಾಡಲು ಬರೋದಿಲ್ಲ ಕಣೋ. ನನ್ನ ಫೀಲಿಂಗ್ಸ್ ನಿನಗೆ ಹೇಗೆ ಅರ್ಥ ಮಾಡಿಸಲಿ? ನನ್ನ ಕಡೆಯಿಂದ ಡಿಸೈಡ್ ಮಾಡಿಯಾಗಿದೆ. ತಾಸುಗಟ್ಟಲೆ ರಿಸರ್ಚ್ ಮಾಡಿದ್ದೇನೆ. ಎರಡು ಪ್ಲ್ಯಾಸ್ಟಿಕ್ ಸರ್ಜನ್ ಜತೆ ಸಪರೇಟ್ ಆಗಿ ಮಾತಾಡಿದ್ದೇನೆ. ನಿನಗೆ ಕಾಣ್ತಿರೋ ಯಾವ ಕಾಂಪ್ಲಿಕೇಶನ್ನೂ ನನಗೆ ಕಾಣ್ತಿಲ್ಲ. ಹಠ ಯಾಕೆ ಮಾಡ್ತೀಯಾ ಅಮ್ಮೂ?” ಸಮಾಧಾನದಲ್ಲೇ ಹೇಳಿದರೂ ಮಾತುಗಳು ಮಂಜಿನ ಚೂರಿಯಂತೆ ಹರಿತವಾಗಿದ್ದವು.
‘ಛೇ! ನಾನ್ಯಾಕೆ ಸವಕಲು ಸಿಮಿಲಿಗಳನ್ನೇ ನೆನಪಿಸಿಕೊಳ್ಳುತ್ತಿದ್ದೇನೆ’ ಎಂದು ಸಶಬ್ದವಾಗಿ ಹಣೆ ಬಡಿದುಕೊಂಡೆ.
“ಅದ್ಯಾಕೆ ಹಣೆ ಚಚ್ಚಿಕೊಳ್ತೀಯಾ? ಮೊದಲ ಸಲ ಬ್ರಾ ಹಾಕಿಕೊಂಡ ಸಂಭ್ರಮ, ಹೈಸ್ಕೂಲಿನಲ್ಲಿ ಯೂನಿಫಾರ್ಮಿನ ಚೌಕುಳಿ ಬ್ಲೌಸಿನ ಸಂದಿಯಲ್ಲಿ ಇಣುಕಿದ ಸ್ಟ್ರಾಪ್ ಒಳತಳ್ಳುವಾಗ ಆದ ನಾಚಿಕೆ, ಧ್ರುವನಿಗೆ ಕೊನೆಯ ಬಾರಿ ಫೀಡ್ ಮಾಡುವಾಗ ನೀನು ಮಾಡಿದ ವಿಡಿಯೋ ನನಗೆ ಕೊಡುವ ಖುಶಿ... ಇದೆಲ್ಲ ಭಾವನೆಗಳನ್ನ - ಹೌ ಕೆನ್ ಐ ಪಾಸ್ ದೆಮ್ ಟೂ ಯೂ? ಹೇಳಿಲ್ವಾ ಕವಿ ಥರ ವಿವರಣೆ ಕೊಡೋದು ನನಗಾಗಲ್ಲ ಅಂತ” ಈ ಬಾರಿ ಅವಳ ಧ್ವನಿ ಆರ್ದ್ರವಾಗಿತ್ತು.
“ಈ ಎರಡು ವರ್ಷ ಅನುಭವಿಸಿದ್ದು ಸಾಲದಾ? ಇನ್ನಷ್ಟು ಆಸ್ಪತ್ರೆ ಓಡಾಟ, ಕೌಂಟ್ಲೆಸ್ ಅಪಾಯಿಂಟ್ಮೆಂಟ್ಸ್, ಫೋನಿನಲ್ಲಿ ಇನ್ನೂ ಒಂದಷ್ಟು ಪಿಲ್ಸ್ ರಿಮೈಂಡರ್ಸ್ ಇದೆಲ್ಲಾ ಬೇಕಾ ಸನ್ನೀ? ಸ್ವಲ್ಪ ಯೋಚನೆ ಮಾಡು. ಹೀಗೆ ಆರಾಮಾಗಿದ್ದುಬಿಡೋಣ” ಮಾತು ಮುಗಿಸೋಣವೆಂದುಕೊಂದಷ್ಟೂ ಮೆದುಳಿಗೂ ನಾಲಿಗೆಗೂ ಲಿಂಕ್ ತಪ್ಪಿದಂತಿತ್ತು ನನಗೆ.
“ಗಂಟೆ ಆಗ್ಲೇ ಎಂಟು. ನಿಂಗೆ ಯಾವತ್ತಿನಂತೆ ಮೆಕ್ಸಿಕನ್ ಬರೀಟೋ ಬೌಲಾ? ನಾನಿವತ್ತು ಸೂಪ್ ಮತ್ತು ಸಲಾಡ್ ಮಾತ್ರ” ಎಂದು ಫೋನಿತ್ತಿಕೊಂಡಳು ಸ್ವಿಗ್ಗಿಯಲ್ಲಿ ಆರ್ಡರ್ ಮಾಡಲು, ಮುಂದೇನಿದೆ ಮಾತಾಡುವುದಕ್ಕೆ ಎನ್ನುವಂತೆ.
*
ಬಾಲ್ಕನಿಗೆ ಬಂದು ಕೂತೆ. ಎಚ್.ಎಸ್.ಆರ್ ಲೇಔಟಿನ ಸುತ್ತಮುತ್ತಲಿನ ಐಟಿ ಕಂಪನಿಗಳ ಬಹುಮಹಡಿ ಕಟ್ಟಡಗಳು ದೀಪಗಳಿಂದ ಜಗಮಗಿಸುತ್ತಿದ್ದವು. ಎರಡು ವಾರದ ಹಿಂದೆ ಈ ಬ್ರೆಸ್ಟ್ ರೀಕನ್ಸ್ಟ್ರಕ್ಶನ್ ವಿಷಯವನ್ನು ಮೊದಲ ಬಾರಿ ಸನ್ಮುಕ್ತಾ ಪ್ರಸ್ತಾಪ ಮಾಡಿದಾಗ ಅರ್ಧ ವಿಷಯ ತಲೆಯೊಳಗೆ ಹೋಗಲೇ ಇಲ್ಲ. ಒಂದೂವರೆ ದಶಕದ ದಾಂಪತ್ಯದಲ್ಲೂ ಅಷ್ಟೆ, ಅವಳ ಪಾತ್ರ ಜಾಸ್ತಿ ಇದ್ದುದು ಚಿಂತನ ಮಂಥನದಲ್ಲಿ. ನನ್ನ ಪಾತ್ರ ಕಾರ್ಯ ನೆರವೇರಿಸುವಲ್ಲಿ.
ದೊಡ್ಡ ಸಾಫ್ಟ್ವೇರ್ ಕಂಪನಿಯಲ್ಲಿ ಲಕ್ಷ ಸಂಪಾದಿಸುತ್ತಿದ್ದರೂ ನನ್ನ ಹುಕಿಗಾಗಿ ಸಣ್ಣದೊಂದು ಪ್ರಾಡಕ್ಟ್ ಶುರುಮಾಡಿ, ಗೆಳೆಯರಿಂದ, ಕಲೀಗ್ಗಳಿಂದ ಮೆಚ್ಚುಗೆ ಪಡೆದುಕೊಂಡು ಅಷ್ಟಕ್ಕೇ ಸುಮ್ಮನಾಗಿ ಕುಳಿತಿದ್ದೆ ನಾನು. ಸನ್ಮುಕ್ತಾ ಯಾವ್ಯಾವ ದಾರಿಯಲ್ಲಿ ಹೋದರೆ ಗಮ್ಯ ಸುಗಮವಾಗಬಹುದು, ಎಲ್ಲಿ ನನ್ನ ಪ್ರಾಡಕ್ಟ್ ಒಂದು ಕಂಪನಿಯಾಗಿ ಬೆಳೆಯಬಲ್ಲದು ಎಂಬುದನ್ನೆಲ್ಲ ಲೆಕ್ಕಾಚಾರ ಹಾಕಿದವಳು. ಕೋಟಿಗಟ್ಟಲೆ ಇನ್ವೆಸ್ಟ್ಮೆಂಟಿನ ಕಠಿಣ ದಾರಿಯನ್ನು ಹೂಹಾದಿಯನ್ನಾಗಿಸಿದವಳು.
ಎರಡು ವರ್ಷದ ಹಿಂದೆ, ಒಂದು ಸುಡು ಬೇಸಿಗೆಯಲ್ಲಿ ಸನ್ಮುಕ್ತಾಳಿಗೆ ಬ್ರೆಸ್ಟ್ ಕ್ಯಾನ್ಸರ್ ಇರುವುದು ಪತ್ತೆಯಾದದ್ದು. ಸ್ವಲ್ಪಕಾಲ ದಿಕ್ಕುತಪ್ಪಿದ ಜೋಡಿಹಕ್ಕಿಗಳಂತೆ ಅಲ್ಲಿಲ್ಲಿ ಅಲೆದರೂ ಹೇಗೋ ಮತ್ತೆ ಗೂಡನ್ನು ಸೇರಿಕೊಂಡಿದ್ದೆವು. ರೇಡಿಯೇಶನ್, ಕೀಮೋ, ಸ್ಕ್ಯಾನುಗಳು, ಡಯೆಟ್ ಪ್ಲ್ಯಾನುಗಳು, ಮಾತ್ರೆಗಳು ಈ ಎಲ್ಲವಕ್ಕೂ ನಮ್ಮ ದಿನಚರಿಯನ್ನು ಹೊಂದಿಸಿಕೊಂಡಿದ್ದೆವು. ದಿನವೂ ಸಂಭವಿಸುವ ರಾತ್ರಿಯ ವಿಹಾರ ನಮ್ಮಿಬ್ಬರಿಗೂ ಥೆರಪ್ಯುಟಿಕ್. ಮಾತ್ರೆಯ ಬಾಧೆ ತಾಳಲಾರದೆ ಗೋಳೆಗುಟ್ಟಿ ಸನ್ಮುಕ್ತಾ ಅತ್ತ ರಾತ್ರಿಗಳಲ್ಲಿ ನಿದ್ದೆ ನನ್ನ ಬಳಿ ಸುಳಿಯುತ್ತಲಿರಲಿಲ್ಲ. ಮಾರನೆಯ ದಿನ ಮತ್ತೆ ಅವಳ ಕಣ್ಣಲ್ಲಿ ಹೊಳಪು ಕಂಡರೆ ನಾನು ಅಂದು ಸ್ವತಃ ಸೂರ್ಯ.
ಕಾಲಕ್ಕೆ ಕೂಡ್ರುವ ಪದ್ಧತಿಯಿಲ್ಲವಲ್ಲ. ಕ್ಯಾನ್ಸರ್ಅನ್ನು ಬುಡಸಮೇತ ಕೀಳಲು ಸನ್ಮುಕ್ತಾಳಿಗೆ ಆಸ್ಪತ್ರೆಯಲ್ಲಿ ಮ್ಯಾಸ್ಟೆಕ್ಟಮಿ ಪ್ರೊಸೀಜರ್ ಮಾಡಿದರು. ಅದರ ನಂತರ ಸಪಾಟಾದ ಒಂದು ಭಾಗದ ಎದೆಯನ್ನು ನೋಡಿದಾಗಲೆಲ್ಲ ನಾನು ಸನ್ಮುಕ್ತಾಳ ಕಣ್ಣನ್ನು ತುಸು ತಪ್ಪಿಸಿದ್ದನ್ನು, ಈಗಲೂ ತಪ್ಪಿಸುವುದನ್ನು ಬಿಟ್ಟರೆ ಬಾಕಿ ಎಲ್ಲವೂ ನಾರ್ಮಲ್ ಎಂದುಕೊಂಡಿದ್ದೆವು ನಾವಿಬ್ಬರೂ. ಹದಿನೈದು ವರ್ಷಗಳ ಏರಿಳಿತಗಳ ಬಂಧ ನಮ್ಮನ್ನು ಸದಾ ಹಿತವಾಗಿ ನೇವರಿಸುತ್ತಿತ್ತಲ್ಲ, ಅದಕ್ಕೇ ಉಳಕಿ ಎಲ್ಲ ನಾರ್ಮಲ್ ನಾರ್ಮಲ್.
ಅದೆಲ್ಲಿಂದ ತಲೆಯಲ್ಲಿ ಹುಳು ಬಿಟ್ಟುಕೊಂಡಳೋ ಗೊತ್ತಿಲ್ಲ ಸನ್ಮುಕ್ತಾ. ಸಪಾಟಾದ ಎದೆಗೆ ಬ್ರೆಸ್ಟ್ ರೀಕನ್ಸ್ಟ್ರಕ್ಶನ್ ಸರ್ಜರಿ ಆಗಲೇಬೇಕೆಂದು ಹಠ ಹಿಡಿದಿದ್ದಾಳೆ. ಹಾಂ...! ಅವಳೇ ಹೇಳಿದ್ದಲ್ಲವೇ ನನಗೆ, ಅವಳ ಡೆವೆಲಪ್ಮೆಂಟ್ ಟೀಮಿನ ಅಮೇರಿಕನ್ ಕೌಂಟರ್ಪಾರ್ಟ್ ಮೆಗ್ ಮೊದಲು ಈ ಬಗ್ಗೆ ಹೇಳಿದ್ದು ಎಂದು..
ಶುರುವಿನಲ್ಲಿ ಸನ್ಮುಕ್ತಾ ಈ ಬಗ್ಗೆ ಮಾತಾಡಿದಾಗ ನಾನೂ ಹಾರಿಕೆಯ ಉತ್ತರ ಕೊಟ್ಟೆ. ಮಾತು ಮರೆಸಲು ನೋಡಿದೆ. ಸನ್ಮುಕ್ತಾಳಲ್ಲಿ ಈ ಬಗ್ಗೆ ಮಾತಾಡುವ ಸಲಿಗೆಯಿಲ್ಲ ಎಂದಲ್ಲ. ಜೀವನ ಇನ್ಮುಂದೆ ಹೀಗೆಯೇ ಎಂದು ನಿರ್ಧರಿಸಿಯಾಗಿತ್ತೇನೋ. ಕಷ್ಟಕಾಲದಲ್ಲಿ ಹೆಂಡತಿಯ ಹಿಂದೆ ನಿಂತವ ಎನ್ನಿಸಿಕೊಳ್ಳುವ ಹಂಬಲವೂ ಎಲ್ಲೋ ಚೂರು ಇದ್ದಿತ್ತೇನೋ. ಇಷ್ಟೆಲ್ಲ ಎದುರಿಸಿದ್ದೇವೆ ಆದರೂ ಜೀವನ ನಾರ್ಮಲ್ ಆಗಿಯೇ ಇದೆ ಎನ್ನುವ ಗಟ್ಟಿತನವನ್ನು ಇನ್ನಷ್ಟು ಕಲ್ಲಾಗಿಸಬೇಕಿತ್ತೇನೋ. ದೇಹದ ಅದೊಂದು ಭಾಗವಿಲ್ಲದಿದ್ದರೆ ಏನು ಮಹಾ? ನಿನ್ನೊಟ್ಟಿಗೆ ಚೆಂದವಾಗಿಯೇ ಬಾಳುವೆ, ಅವರಿವರು ಮಾತಿನ ಕಲ್ಲೆಸೆಯಲು ಬಿಡಲಾರೆ ಎಂಬ ಭಾವನೆಯನ್ನು ಸನ್ಮುಕ್ತಾಳಿಗೆ ದಾಟಿಸುವ ಸೋಗು ಗಾಢವಾಗಿತ್ತೇನೋ.
ಇಷ್ಟು ವರ್ಷದ ಜತೆತನದಲ್ಲಿ ಯಾವತ್ತೂ ಎರಡು ದಿನಕ್ಕಿಂತ ಜಾಸ್ತಿ ಮುಂದುವರೆದ ಭಿನ್ನಾಭಿಪ್ರಾಯಗಳು ನಮ್ಮ ನಡುವೆ ಇರಲಿಲ್ಲ. ಈ ಬಾರಿ ಮಾತ್ರ ಎರಡು ವಾರಕ್ಕೂ ಮಿಕ್ಕಿ ತಿಕ್ಕಾಟ ನಡೆಯುತ್ತಿದೆಯಲ್ಲ. ನನ್ನ ನಿರಾಶೆ, ಹತಾಶೆ ಮಿಗುವರೆಯಿತು.
ಬಾಲ್ಕನಿಯಿಂದ ಡೈನಿಂಗ್ ಟೇಬಲಿನತ್ತ ಬಂದಾಗ ಸ್ವಿಗ್ಗಿಯಿಂದ ಬಂದ ಬರೀಟೋ ಬೌಲ್ ಮಾತ್ರ ಕಂಡಿತು. ಒಮ್ಮೆ ಅಡುಗೆಮನೆಯ ಸಿಂಕಿನ ಬಳಿ ಹೋಗಿ ಸನ್ಮುಕ್ತಾ ಊಟ ಮುಗಿಸಿದ್ದಾಳೆ ಎಂಬುದನ್ನು ಖಾತ್ರಿ ಮಾಡಿಕೊಂಡೆ. ಆರನೇ ಫ಼್ಲೋರಿನ ಗೆಳೆಯನ ಮನೆಗೆ ಹೋಗಿದ್ದ ಮಗ ಧ್ರುವ ಕೂಡಾ ಮನೆಗೆ ವಾಪಸ್ಸಾಗಿ ತನ್ನ ರೂಮಿನ ಕಂಪ್ಯೂಟರ್ನಲ್ಲಿ ಮುಳುಗಿದ್ದ. ಅವನ ಕಂಪ್ಯೂಟರಿನ ಎಕ್ಸೆಲ್ ಶೀಟಿನ ಮೇಲೆ ‘ಎಕ್ಸಾಂ - ಹೆಡ್ ಆನ್ ಕೊಲಿಶನ್’ ಎಂಬುದು ದಪ್ಪಕ್ಷರದಲ್ಲಿ ಕಾಣುತ್ತಿತ್ತು.
ಬರೀಟೋ ಬೌಲ್ ಬರಿದು ಮಾಡಿ ಮತ್ತೆ ಬಾಲ್ಕನಿಗೆ ಹೋಗಿ ಕುಕ್ಕರಿಸಿದೆ. ಅಸಂಬದ್ಧ ಯೋಚನೆಗಳು, ಇವಳ ಕ್ಯಾನ್ಸರಿನ ವಿಷಯ ಗೊತ್ತಾದಾಗ ಶುರುವಿನ ದಿನಗಳಲ್ಲಿದ್ದಂತೆ. ಸಾಕಾಯಿತಪ್ಪ ಈ ಬಗ್ಗೆಯೇ ಯೋಚಿಸಿ. ನನಗಿಂತ ಜಾಸ್ತಿ ವ್ಯಾಲಿಡೇಶನ್ ಬೇಕಾ ಇವಳಿಗೆ? ನಾನೇ ಇವಳ ಸಪಾಟನ್ನು ಸ್ವೀಕರಿಸಿಯಾಗಿದೆ ಇನ್ನೆಲ್ಲಿಯ ರಗಳೆ ಇವಳದ್ದು ಎಂದು ಛೇಗುಟ್ಟಿದೆ ಶಬ್ದಸಹಿತವಾಗಿ. ತಕ್ಷಣ ನನ್ನ ಮೇಲೇ ನನಗೆ ಹೇವರಿಕೆ ಬಂತು. ಎಂಥ ಕೆಟ್ಟ ವಿಡಂಬನೆಯಪ್ಪಾ ಎಂದು ತಲೆ ಕೊಡವಿದೆ.
ಕುಟುಂಬಕ್ಕೆ ಇಂಬಾದ ಬಾಳಸಂಗಾತಿ ಅನುಭವಿಸಲಿರುವ ಮೆಡಿಕಲ್ ಕಾಂಪ್ಲಿಕೇಶನ್, ತೊಡಕುಗಳೇ ನನ್ನನ್ನು ನಿಜವಾಗಿಯೂ ಕಾಡುತ್ತಿವೆಯಾ ಅಥವಾ ‘ನಾನು ಹೇಳಿದ ಮಾತು ನೀನು ಕೇಳುತ್ತಿಲ್ಲ’ ಎನ್ನುವುದೇ ನನ್ನ ಕೋಪದ ಮೂಲವಾ ಎಂದು ನನ್ನ ಕಾಳಜಿಯ ಉದ್ದೇಶವನ್ನೇ ಮತ್ತೆ ಮತ್ತೆ ಪ್ರಶ್ನಿಸಿಕೊಂಡೆ. ಪ್ರಶ್ನೆಗಳು ಜಟಿಲವಾಗುತ್ತ ನಡೆದವು.
ಹತ್ತು ವರ್ಷದ ಹಿಂದೆ ನಡೆದ ಘಟನೆಯನ್ನು ಇವತ್ತಿಗೆ ತಳುಕು ಹಾಕುವ ಅಗತ್ಯವಿಲ್ಲ. ಆದರೂ ನೆನಪಿಗೆ ಬರುತ್ತಿದೆ. ದೊಡ್ಡ ಐಟಿ ಕಂಪನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆ ನಿರ್ವಹಿಸುತ್ತಿದ್ದ ಕಾಲ. ಆರು ವಾರದ ಸಲುವಾಗಿ ಇಂಗ್ಲೆಂಡಿನ ಬರ್ಮಿಂಗ್ಹಮ್ ಆಫೀಸಿಗೆ ಹೋಗಿದ್ದೆ, ನವೆಂಬರ್ ತಿಂಗಳಿನಿಂದ ಡಿಸೆಂಬರ್ವರೆಗೆ. ವರ್ಷಾಂತ್ಯ ಬಂತೆಂದರೆ ಅಲ್ಲಿನವರಿಗೆ ಮೋಜಿನ ಸಮಯ. ಆಫೀಸಿನಲ್ಲಿ ಸೀಕ್ರೆಟ್ ಸ್ಯಾಂಟಾ ಗಿಫ್ಟ್ ಎಕ್ಸ್ಚೇಂಜ್ ಸಂಭ್ರಮ ನಡೆದಿತ್ತು. ಆಫೀಸಿನ ಮೂಲೆಯಲ್ಲಿ ಸಿಂಗರಿಸಿಕೊಂಡು ನಿಂತಿದ್ದ ಕ್ರಿಸ್ಮಸ್ ಟ್ರೀಯ ಬುಡದಲ್ಲಿ, ಒಂದು ದಿನ ಮುಂಚಿತವಾಗಿ ಎಲ್ಲರೂ ಉಡುಗೊರೆಗಳನ್ನು ತಂದಿಡಬೇಕು. ಕ್ರಿಸ್ಮಸ್ ಈವ್ ಆದ ಡಿಸೆಂಬರ್ ಇಪ್ಪತ್ನಾಲ್ಕರಿಂದ ಆಫೀಸಿಗೆ ರಜೆ. ಹಾಗಾಗಿ ಇಪ್ಪತ್ಮೂರರಂದು ಸಂಜೆ ತಮ್ಮ ತಮ್ಮ ಹೆಸರಿದ್ದ ಉಡುಗೊರೆಯನ್ನು ಪ್ರತಿಯೊಬ್ಬರೂ ಪಾಳಿಯ ಪ್ರಕಾರ ಎಲ್ಲರೆದುರು ತೆರೆದು ತೋರಿಸಬೇಕು. ವಿಚಿತ್ರ ಸ್ಲೋಗನ್ನುಗಳಿದ್ದ ಜಂಪರ್, ಪೈರೆಟ್ ಐಪ್ಯಾಚ್, ಬೆತ್ತಲೆ ಜೋಡಿಯಿದ್ದ ಕರ್ಟನ್ ಹೀಗೆ ಇನ್ನೂ ಕೆಲವು ಉಡುಗೊರೆಗಳನ್ನು ಸಹೋದ್ಯೋಗಿಗಳು ತೆರೆದಾದ ಮೇಲೆ ನನ್ನ ಸರದಿ ಬಂತು. ನನ್ನ ಹೆಸರು ಯಾರಿಗೆ ಬಂದಿತ್ತು ಗೊತ್ತಿಲ್ಲ... ನಾನು ನಿಧಾನಕ್ಕೆ ಗಿಫ್ಟ್ ಪೇಪರನ್ನು ಬಿಚ್ಚಿ ಪೊಟ್ಟಣವನ್ನು ತೆಗೆದೆ. ಮೆತ್ತಮೆತ್ತಗಿನ ಅನುಭವವಾದಂತಾಯ್ತು. ಕೊನೆಯ ಪದರವನ್ನೂ ಬಿಡಿಸಿದೆ. ನನ್ನ ಮಧ್ಯಮಗಾತ್ರದ ಕೈಯಿಂದ ಹೊರ ತುಳುಕುವಷ್ಟು ದೊಡ್ಡ ಸ್ತನ! ಆರ್ಟಿಫೀಶಿಯಲ್ ಬ್ರೆಸ್ಟ್. ಹೂಬೇಹೂಬ್ ನಿಜವಾದ ಮೊಲೆಯಂತೆಯೇ ಇದೆ. ನನ್ನ ಮುಖವೆಲ್ಲ ಕೆಂಪಡರಿತು. ಸಹೋದ್ಯೋಗಿಗಳೆಲ್ಲ ‘ಹೋ’ ಎಂದು ಕಿರುಚಿ ಕಿಚಾಯಿಸಿದರು. ನಾಚಿಕೆಯೋ, ಕಲ್ಚರಲ್ ಆಘಾತವೋ ಕೆಲವು ನಿಮಿಷಗಳಷ್ಟು ಕಾಲ ಮಾತೇ ಆಡಲಿಲ್ಲ ನಾನು. ನನ್ನ ಸೀಕ್ರೆಟ್ ಸ್ಯಾಂಟಾ ಉಡುಗೊರೆಯನ್ನು ಯಾರೂ ನೋಡೇ ಇಲ್ಲವೇನೋ ಎಂಬಂತೆ ಕದ್ದು ಲ್ಯಾಪ್ಟಾಪ್ ಬ್ಯಾಗಿನೊಳಗೆ ಸೇರಿಸಿದೆ. ಮೊದಲೇ ನಿಗದಿಯಾಗಿದ್ದಂತೆ ಮರುದಿನ ಭಾರತಕ್ಕೆ ಹೊರಟುಬಂದೆ. ಮನೆಗೆ ಬಂದ ಮಾರನೆಯ ರಾತ್ರಿ ಧ್ರುವ ಮಲಗಿದ ನಂತರ ಸನ್ಮುಕ್ತಾಳಿಗೆ ಒಮ್ಮೆ ಸ್ಯಾಂಟಾ ಕೊಟ್ಟ ಉಡುಗೊರೆ ತೋರಿಸಿ ಅದನ್ನು ಕವರ್ ಸಮೇತವಾಗಿ ನನ್ನ ವಾರ್ಡ್ರೋಬಿನ ಇನ್ನರ್ ಡ್ರಾದ ಮೂಲೆಯಲ್ಲಿ ತುರುಕಿದೆ. ಸನ್ಮುಕ್ತಾ ಅಂದು ಮನಸೋಯಿಚ್ಛೆ ನಕ್ಕಿದ್ದಳು.
ಎಷ್ಟು ಹೊತ್ತು ಹೊರಗೆ ಕೂತಿದ್ದೆನೋ. ಪಕ್ಕದ ಲೇಔಟಿನಲ್ಲಿ ಗಾರ್ಡ್ ಎಡೆಬಿಡದೆ ಹೊಡೆಯುತ್ತಿದ್ದ ಸೀಟಿ ನನ್ನನ್ನು ಮತ್ತೆ ಈ ಲೋಕಕ್ಕೆ ಕರೆತಂದಿತು. ಬೆಡ್ರೂಮಿಗೆ ಬಂದೆ. ಸನ್ಮುಕ್ತಾ ನಿದ್ದೆ ಮಾಡಿಲ್ಲ ಎಂಬುದು ನನಗೆ ಗೊತ್ತು. ಗಾಢ ನವಿಲು ಬಣ್ಣದ ಕಿಟಕಿಯ ಪರದೆಯ ಕಡೆ ಮುಖ ಮಾಡಿ ಮಲಗಿದವಳ ಮಗ್ಗುಲಿಗೆ ಬಂದು ಕೂತೆ. ‘ಸನ್ನೀ’ ಎಂದು ನಿಧಾನವಾಗಿ ಕರೆದೆ. ಹಣೆಯ ಮೇಲೆ ಬೆರಳಾಡಿಸಿದೆ. ಇಡೀ ದೇಹವನ್ನು ಜರುಗಿಸಿ ಜಾಗ ಮಾಡಿದವಳೇ ಕಾಲರ್ ಹಿಡಿದು ಜಗ್ಗಿ ನನ್ನನ್ನೂ ತನ್ನ ಪಕ್ಕ ಒರಗಿಸಿಕೊಂಡಳು.
“ಸನ್ನೀ, ನಿನ್ನ ಆಪರೇಶನ್ ಆಗಿ ಹದಿನೆಂಟು ತಿಂಗಳಾಯ್ತು. ಅಷ್ಟೊಂದು ತಿಂಗಳು ಆಸ್ಪತ್ರೆಗೆ ಟೆಸ್ಟ್ಗಳಿಗೆ ಹೋಗಿದ್ದು, ಪ್ರತೀ ರಿಪೋರ್ಟ್ ಓದುವ ಮೊದಲೂ ಕೈಕಾಲು ತಣ್ಣಗಾಗಿದ್ದು ಎಲ್ಲವೂ ಮರೆತೆಯಾ? ಈಗಲೂ ತುಂಬ ಸುಂದರಿ ನೀನು. ನನಗೆ ಅಪ್ಸರೆಯೇ. ಧ್ರುವನಿಗಂತೂ ದೇವತೆ ನೀನು. ದ್ಯಾಟ್ಸ್ ವಾಟ್ ಹೀ ಸೇಸ್ ರೈಟ್? ಈ ಎರಡು ವಾರ ನಮ್ಮ ಜೀವನದಲ್ಲಿ ಇರಲೇಯಿಲ್ಲ ಎಂದುಕೊಂಡು ಸುಮ್ಮನಾಗಿಬಿಡೋಣ”
“ಐ ಹ್ಯಾವ್ ಕ್ಲೋಸ್ಡ್ ದಿಸ್ ಸಬ್ಜೆಕ್ಟ್. ಸರ್ಜರಿ ಶೆಡ್ಯೂಲ್ ಆಗಿದೆ. ನನ್ನ ಸರ್ಜನ್ನಿನ ನಂಬರನ್ನ ಆಗಲೇ ಶೇರ್ ಮಾಡಿದ್ದೇನೆ. ಒಮ್ಮೆ ನೀನೂ ಮಾತಾಡಿ ನೋಡು” ಅವಳದ್ದೂ ಹಠ.
“ಇಷ್ಟು ಮುಂದುವರೆದ ಮೇಲೆ ಇನ್ನೇನಿದೆ?” ಅಹಂಅನ್ನು ಹತ್ತಿಕ್ಕುವ ಸರ್ವಪ್ರಯತ್ನ ನನ್ನಿಂದ ಜಾರಿಯಲ್ಲಿತ್ತು.
“ಹೊರಗಿನ ಗಾಳಿ ನಿನ್ನ ತಲೆಯನ್ನ ಹಗುರಾಗಿಸಿತು ಎಂದು ಭಾವಿಸಿ ಮಾತಾಡುವ ಎಂದೆ” ಪಟ್ಟು ಬಿಡಲೊಲ್ಲಳು.
“ಯಾಕೆ ಸನ್ನೀ? ಮರೆತೆಯಾ ನಮ್ಮ ಮಾತುಕತೆ... ಬರೀ ಏರುಗತಿಯೇ ಆದರೆ ನಮ್ಮ ಬೇರನ್ನ ಮರೆಯುತ್ತೇವೆಂದು, ಬೇರಿಗೆ ಹುಳಹಿಡಿದು ಬದುಕಿನ ಮರ ಬೀಳುತ್ತದೆಂದು ಅಲ್ಲಲ್ಲಿ ಪಾಸ್ ತೆಗೆದುಕೊಳ್ಳುತ್ತೇವಲ್ಲ? ಅಲ್ಲವ..? ನೀನು ತಿಳಿಹೇಳು ನನಗೆ. ಇಷ್ಟೂ ವರ್ಷ ಕಾಲ ಇದೇ ಅಲ್ಲವೇ ನಾವು ಮಾಡಿದ್ದು?”
“ಅಬಾ, ಎಷ್ಟಪ್ಪ ಮಾತು! ಈ ಬಾರಿ ನಿಂಗೆ ತಿಳಿಹೇಳುವ ವಿವೇಕ ನನ್ನಲ್ಲಿಲ್ಲ” ಅವಳು ಮಾತಾಡಿದ ನಂತರ ವಿಷಾದ ತುಂಬಿತು ರೂಮನ್ನ.
ಪ್ರಯತ್ನಪೂರ್ವಕವಾಗಿ ಕೊರಳ ಇಳಿಜಾರ ನೇವರಿಸಹೋದೆ. ಸಟ್ಟನೆ ಕೈ ತಳ್ಳಿದಳು.
“ಇನ್ಟ್ಯಾನ್ಜಿಬಿಲಿಟಿ ಆಫ್ ದಿ ಫೀಲಿಂಗ್ಸ್... ರಿಮೆಂಬರ್? ಹಾಗೇ ಇರಲಿ ಬಿಡು ಅಮ್ಮೂ... ಭಾವನೆಗಳ ಬಂಧವೂ ಬೇಡ”
“ಬದುಕನ್ನ ಬಂದಹಾಗೇ ಅಪ್ಪಿಕೊಂಡಾಗಿದೆ ಸನ್ನೀ, ಕಾಣದ ಇನ್ನೊಂದು ತಿರುವು ಬೇಡ” ಕೊನೆಯ ಪ್ರಯತ್ನವೆಂಬಂತೆ ಹೇಳಿದೆ.
“ನಾನು ದಿನವೂ ಅರಳಲು ಪ್ರಯತ್ನಿಸಿ ನರಳುತ್ತಿರುವುದು ನಿಂಗೆ ಕಂಡಿಲ್ಲ ಎಂದಾದರೆ ನಿನಗೆ ಕಣ್ಣಿದ್ದೂ ಪ್ರಯೋಜನವೇನು...?” ನೇರ ಮಾತು ಅವಳದ್ದು.
“...”
“ವಾರ್ಡ್ರೋಬಿನ ಬಟ್ಟೆಗಳು ನನ್ನನ್ನು ಅಣಕಿಸುತ್ತವೆ ಕಣೋ... ಬೋರ್ಡ್ರೂಮಿನಲ್ಲಿ ಎಲ್ಲರೆದುರು ಫ್ರೀಜ್ ಆಗಿಬಿಡುತ್ತೀನಿ. ಇದಕ್ಕೆಲ್ಲ ಒಂದು ಫುಲ್ಸ್ಟಾಪ್ ಬೇಕಲ್ಲ.”
“ಐ ಥಾಟ್, ವಿ ಹ್ಯಾವ್ ಗಾನ್ ಪಾಸ್ಟ್ ಆಲ್ ದೀಸ್. ಗೋ ಫ್ಲ್ಯಾಟ್ ಫೋಟೋಶೂಟ್ ಬಗ್ಗೆ ಬೇರೆ ಮಾತಾಡಿದ್ದೆವಲ್ಲ...?” ನನಗೆ ಇನ್ನೂ ಇವಳನ್ನು ಇಲ್ಲೇ ತಡೆಹಿಡಿಯುವ ಹುಕಿ.
“ಸೋ ಕಾಲ್ಡ್ ಇನ್ಕ್ಲೂಸಿವ್ನೆಸ್ಸಿನ, ಎಜುಕೇಟೆಡ್ ಸೊಸೈಟಿಯ ಡ್ರಾಮಾ ಅಲ್ಲವಾ ಇದೆಲ್ಲ...? ಗೋ ಫ್ಲ್ಯಾಟ್ ಫೋಟೋಶೂಟಂತೆ! ಕ್ಲಿವೇಜ್ ತೋರಿಸುವ ಡ್ರೆಸ್ ಹಾಕಿದಾಗಲೆಲ್ಲ ಎಷ್ಟು ಬಾರಿ ಕಾಂಪ್ಲಿಮೆಂಟ್ ಕೊಟ್ಟಿಲ್ಲ ನೀನು!” ಕಳ್ಳನನ್ನು ಹಿಡಿದಂತೆ ಮಾತಾಡಿದಳು.
ಥತ್! ನನ್ನನ್ನ ಡೈಲೆಮಾದಲ್ಲಿ ಹಾಕುತ್ತಿದ್ದಾಳಲ್ಲ ಮತ್ತೆ ಇವಳು ಎನ್ನಿಸಿತು. ಮಾತುಗಳು ಇನ್ನಷ್ಟು ರಾಡಿ ಮಾಡುವ ಮೊದಲು ಬ್ರಶ್ ಮಾಡುವ ನೆಪಮಾಡಿ ಬಾತ್ರೂಮಿಗೆ ನಡೆದೆ. ಹಲ್ಲುಕಿರಿದಂತಾಗಿದ್ದ ಬ್ರಶ್ಶನ್ನು ಮೂಲೆಗೆ ರಪ್ಪನೆ ಎಸೆದೆ. ಅವಳಿಗೆ ಏಕಾಂತ ಬೇಕಿತ್ತೋ ನನಗೆ ಬೇಕಿತ್ತೋ ಗೊತ್ತಿಲ್ಲ, ಮಗನ ರೂಮಿಗೆ ಹೋಗಿ ಅವನ ಮಗ್ಗುಲಿನಲ್ಲಿ ಜಾಗ ಮಾಡಿ ಮಲಗಿದೆ.
ಬೆಳಗ್ಗೆ ಐದಕ್ಕೇ ಎಚ್ಚರವಾಯಿತು. ಊರಿಗೆ ಹೋಗಿ ಬರುವ ನಿರ್ಧಾರ ಮಾಡಿದೆ. ಐದು ಗಂಟೆಗಳ ನಾನ್ಸ್ಟಾಪ್ ಡ್ರೈವ್. ಎರಡು ದಿನಗಳ ‘ಓಓಓ’ ಸೆಟ್ಅಪ್ ಮಾಡಿ, ಆಫೀಸಿಗೆ ಬರಲಾಗುವುದಿಲ್ಲ ಎಂದು ಇಮೇಲ್ ಬರೆದು ‘ಸೆಂಡ್ ಆಲ್’ ಬಟನ್ನೊತ್ತಿದೆ. ಬೆಕ್ಕಿನ ಹೆಜ್ಜೆಯಿಟ್ಟು ರೂಮಿನೊಳಗೆ ಹೋಗಿ ವಾರ್ಡ್ರೋಬಿನ ಇನ್ನರ್ ಡ್ರಾ ತೆಗೆದು ಹತ್ತುವರ್ಷದಿಂದ ಮುಟ್ಟದೇ ಇದ್ದ ಸಿಕ್ರೇಟ್ ಸ್ಯಾಂಟಾ ಗಿಫ಼್ಟನ್ನು ಎತ್ತಿಟ್ಟುಕೊಂಡೆ.
‘ಸನ್ನೀ, ಅಮ್ಮನನ್ನು ನೋಡಿಬರುವೆ’ ಎಂದು ಮೆಸೇಜಿಸಿ ಕಾರು ಹತ್ತಿದೆ.
ದಣಪೆ ದಾಟಿ ಅಂಗಳಕ್ಕೆ ಬಂದಾಗ ಅಮ್ಮ ಕೊಟ್ಟಿಗೆಯಲ್ಲಿದ್ದಳು. “ಅರೇ...ಯಾರು ಬಂದರು ನೋಡು ಗಿರಿಜೆ” ಎನ್ನುತ್ತ ಅಂಗಳಕ್ಕೆ ಬಂದಳು ಅಮ್ಮ. ಗಿರಿಜೆ ಎಲ್ಲ ಗೊತ್ತಾದವಳಂತೆ ಅಂಗಳದತ್ತ ತಿರುಗಿ ಅಂಬಾ ಅಂದಿತು. ಆಗಲೇ ಹೊಳೆದಿದ್ದು ಊರಿಗೆ ಬಂದು ಆರು ತಿಂಗಳಾಗಿದೆ ಎಂದು. ಅರವತ್ತು ಸೀಮೆಯಲ್ಲರಸಿದ ನೆಮ್ಮದಿ ಅವಿತಿದ್ದು ಮಾತ್ರ ಅಮ್ಮನ ಮಡಿಲಲ್ಲಿ ಅನ್ನುವ ಮಾತು ಮನಸ್ಸಿನಲ್ಲಿ ಹೊಳೆದು ತುಟಿಗಳು ಅಗಲವಾದವು. ಒಳ್ಳೆಯ ಎತ್ತರದ ಅಮ್ಮ ಕೆಂಪು ಸೀರೆ, ಕಪ್ಪು ಪೋಲಕದಲ್ಲಿ ಎಂದಿಗಿಂತ ಚೆಂದ ಕಂಡಳು.
ನಾ ಕಂಡಷ್ಟು ದಿನವೂ ಅಮ್ಮನ ಮೇಲೆ ಕೆಸಕ್ಕನೆ ಹಚಗುಟ್ಟುತ್ತಿದ್ದ ಅಪ್ಪ ಅರವತ್ತಕ್ಕೆ ತೀರಿಕೊಂಡಿದ್ದ.
ಬರೀ ಒಳ್ಳೆಯತನ ಮಾತ್ರ ಮನುಷ್ಯನಲ್ಲಿರಲು ಸಾಧ್ಯವೇ? ಎಂದು ಪ್ರಶ್ನಿಸಿಕೊಂಡ ಅಮ್ಮ ಎಲ್ಲವನ್ನೂ ಹೊಟ್ಟೆಯಲ್ಲಿ ಹಾಕಿಕೊಂಡಂತಿದ್ದಳು. ಪರಿಸ್ಥಿತಿ ಯಾವುದೇ ಇರಲಿ, ಜೊತೆಯಿರುವ ಜೀವಗಳ ಅನುತನು ನೋಡುವುದು ಹೇಗೆಂದು ಅಮ್ಮ ಮಾತನಾಡದೇ ಕಲಿಸಿಕೊಟ್ಟಿದ್ದಳು.
ಅಪ್ಪ ಹೋದ ಮೇಲೆ ಕೊಟ್ಟಿಗೆ, ಮನೆ ಸುತ್ತಲ ಜಮೀನು, ಕಾರ್ಯಕಟ್ಟಲೆ, ಆಗೀಗ ನಮ್ಮೊಡನೆ ವಿಡಿಯೋ ಕಾಲ್ಗಳು ಎಂದುಕೊಂಡು ಆರಾಮವಾಗಿದ್ದಳು. ಮೊದಲು ಕಳೆದ ಕಷ್ಟದ ದಿನಗಳ ಕನಸು ಬಿದ್ದು ನಿದ್ದೆ ಕೆಡಿಸದಿರಲಿ ಎಂದು ದಿನವೂ ಅರ್ಧ ನಿದ್ದೆಗುಳಿಗೆ ನುಂಗುವುದನ್ನು ಮಾತ್ರ ಮರೆಯುತ್ತಿರಲಿಲ್ಲ.
ವರ್ಷಕ್ಕೊಮ್ಮೆ ವಾರದ ಮಟ್ಟಿಗೆ ನಮ್ಮೊಟ್ಟಿಗೆ ಬಂದಿದ್ದು ಮೊಮ್ಮಗನಿಗೆ ಅಚ್ಚೆ ಮಾಡುತ್ತಿದ್ದಳು. ಅದರಾಚೆಗೆ ಅವಳೂ ಏನೂ ನಿರೀಕ್ಷಿಸುತ್ತಿರಲಿಲ್ಲ, ನಾವೂ ಅವಳನ್ನು ಪರೀಕ್ಷೆಗೊಡ್ಡುತ್ತಿರಲಿಲ್ಲ.
ಒಂದೊಳ್ಳೆಯ ಸ್ನಾನ ಮಾಡಿ ಅಮ್ಮನ ಅಕ್ಕರಾಸ್ಥೆಯ ಜಮೀನಿನಲ್ಲಿ ತಿರುಗಾಡಿದೆ. ತಿಳಿಸಾರನ್ನು ಲೋಟದಲ್ಲಿ ಸೊರಸೊರ ಶಬ್ದಮಾಡಿ ಕುಡಿದೆ. ಗಾಡ್ರೆಜ್ ಬೀರುವಿನ ಬಾಗಿಲನ್ನು ಸಶಬ್ದವಾಗಿ ತೆಗೆದು ಅಮ್ಮ ಜೋಡಿಸಿಟ್ಟುಕೊಂಡ ಸೀರೆಗಳ ಮೇಲೆ ಪ್ರೀತಿಯಿಂದ ಕೈಯಾಡಿಸಿದೆ. ಹಿತ್ತಿಲ ಬಾಗಿಲಲ್ಲಿದ್ದ ಕೈತೊಳೆವ ಸಿಂಕಿನ ಮೇಲ್ಭಾಗದ ಕನ್ನಡಿ ಪಳಪಳ ಹೊಳೆಯುತ್ತಿರುವುದ ನೋಡಿ ಬೆರಗಾದೆ. ಮೊದಲು ಯಾವತ್ತೂ ಈ ಕನ್ನಡಿಯ ಹೊಳಪು ನನ್ನ ಕಣ್ಣಿಗೆ ಬೀಳದ್ದಕ್ಕೆ ಬೇಸರಪಟ್ಟೆ.
‘ನಾಳೆ ಬೆಳಗ್ಗೆ ಒತ್ತು ಶ್ಯಾವಿಗೆ ಮಾಡಲಾ’ ಎಂದು ಕೇಳಿದ ಅಮ್ಮ ನನ್ನ ಉತ್ತರವನ್ನು ಮೊದಲೇ ಊಹಿಸಿದವಳಂತೆ ಎದ್ದು ದೇವರಮನೆಯ ಪಕ್ಕದ ಪಡಸಾಲೆಯಲ್ಲಿ ಮಲಗಿದಳು. ಜಗುಲಿಯಲ್ಲಿ ಟಿ.ವಿ ಚ್ಯಾನೆಲ್ ಬದಲಾಯಿಸುತ್ತ ಬಿದ್ದುಕೊಂಡೇ ಇದ್ದ ನನ್ನ ತಲೆಯಲ್ಲಿ ನೂರು ಆಲೋಚನೆಗಳು ಬಟ್ಟೇಗುಣಿ ತಿರುಗುತ್ತಿದ್ದವು. ಕಟಾಂಜನದ ಮಧ್ಯೆ ಮಾಲೆ ಹಾಕಿ ಕೂತ ಅಪ್ಪನ ಫೋಟೋದ ಮೇಲೆ ಬೇಡವೆಂದರೂ ಕಣ್ಣು ಹೊರಳುತ್ತಿತ್ತು. ನಾನು ಏನೋ ನಿರ್ಧರಿಸಿದಂತೆ ಎದ್ದೆ. ಗಡಿಯಾರ ಹನ್ನೊಂದೂವರೆ ತೋರಿಸುತ್ತಿತ್ತು. ಬ್ಯಾಗಿನಲ್ಲಿದ್ದ ಸೀಕ್ರೆಟ್ ಸ್ಯಾಂಟಾ ಗಿಫ್ಟನ್ನು ಕವರಿನ ಸಮೇತ ತೆಗೆದು ಕೊಟ್ಟಿಗೆಯ ಪಕ್ಕ ಬಂದೆ. ಕೈಗೆ ಸಿಕ್ಕ ಕೋಲಿನ ಸಹಾಯದಿಂದ ಮಣ್ಣು ಕಲ್ಲು ಏನನ್ನೂ ಲೆಕ್ಕಿಸದೇ ಸಣ್ಣದೊಂದು ಗುದ್ದ ತೋಡಿ ಗಿಫ್ಟನ್ನು ಅದರೊಳಗಿಟ್ಟೆ. ಸುತ್ತಲಿದ್ದ ಮಣ್ಣನ್ನು ಗುದ್ದವೇ ಕಾಣದಂತೆ ಮುಚ್ಚಿದೆ. ಎದ್ದು ನಿಂತೆ. ಮೈ ಇದ್ದಕ್ಕಿದ್ದಂತೆ ಹಗುರಾದಂತಾಯಿತು. ಒನ್ನಮೂನೆ ಸ್ಖಲನದ ಸುಖ!
ಮತ್ತೆ ಜಗುಲಿಗೆ ಬಂದು ಹಾಸಿಗೆಯ ಪಕ್ಕದಲ್ಲಿದ್ದ ಮೊಬೈಲನ್ನು ಎತ್ತಿಕೊಂಡು ಸನ್ಮುಕ್ತಾಳ ಸರ್ಜನ್ನರ ನಂಬರನ್ನು ಸೇವ್ ಮಾಡಿಕೊಂಡೆ. ಮೆಸೇಜ್ ಟೈಪ್ ಮಾಡತೊಡಗಿದೆ... ‘ಡಾಕ್, ದಿಸ್ ಇಸ್ ಸನ್ಮುಕ್ತಾಸ್ ಹಸ್ಬಂಡ್ ಅಮಿತ್. ಐ ವಿಲ್ ಬೀ ಇನ್ಫ಼್ರಂಟ್ ಆಫ್ ದ ಥಿಯೇಟರ್ ಡ್ಯೂರಿಂಗ್ ದ ಸರ್ಜರಿ ಟುಮೊರೋ.’
