ಬೆಕ್ಕಿನ ಬಾಣಂತನ – ಅನುಭವ ಕಥನ

ಬೆಕ್ಕಿನ ಬಾಣಂತನ
ಆಕೆಯ ಹೆಸರು ಐಶ್ವರ್ಯ!
ಮನೆಯ ಹತ್ತಿರವಿದ್ದ ಫಾರೆಸ್ಟ್ ಡಿಪೋ ದಾರಿಯಿಂದ ಹಾದು ಬರುತ್ತಿದ್ದಾಗ ನನ್ನ ಗೆಳತಿ ಮಂಗಲಾ ನನ್ನ ಕರೆದು. 'ಅಮಿತಾ ನಿನಗೆ
ಬೆಕ್ಕಿನ ಮರಿ ಬೇಕಾ?' ಎಂದು ಕೇಳಿದಳು. ಬೆಕ್ಕು, ನಾಯಿ ಎಂದರೆ ನಮ್ಮ ಜನ್ಮದ ಬಂಧುಗಳು. ಅವರನ್ನು ಬೇಡ ಎಂದು ಹೇಳಿ
ನಾನ್ಯಾವ ನರಕ ನೋಡಲಿ?

ಮನೆಯಲ್ಲಿ ಬೆಕ್ಕಿನ ಮರಿ ಇತ್ತಾದರೂ, ಮಂಗಲಾ ತೋರಿಸಿದ ಆ ಪುಟ್ಟ ಪುಟಾಣಿ ಮುದ್ದಿನ ಸೊಕ್ಕನ್ನ ನೋಡಿದ ಮೇಲೆ
ಇಲ್ಲವೆನ್ನಲು ಆಗಲೇ ಇಲ್ಲ.
ದಪ್ಪ ಬಾಲದ ಉದ್ದ ರೋಮಗಳ ಆ ಬೆಕ್ಕಿನ ಮರಿಯನ್ನ ಎತ್ತ್ಕೊಂಡ್ ಬಂದುಬಿಟ್ಟೆ.

ಆದರೆ ಈ ವಿಷಯವನ್ನು ಮನೆಯಲ್ಲಿ ಅಮ್ಮನ ಎದುರು ಹೇಳುವ ಧೈರ್ಯ ನಮ್ಮಲ್ಲಿ ಯಾರಿಗೂ ಇರ್ಲಿಲ್ಲ. ಈ ಸಾಕು ಪ್ರಾಣಿ
ವಿಷಯದಲ್ಲಿ ನನ್ನ ಅಮ್ಮನಿಗೆ ಅವಳದೇ ಆದ ಕೆಲವು ನಿಲುವು, ನಿಯಮಗಳಿದ್ದವು, ಈಗಲೂ ಆಕೆ ಅವನ್ನೆಲ್ಲ ಹಾಗೆಯೇ
ಪಾಲಿಸಿಕೊಂಡು ಬಂದಿದ್ದಾಳೆ.
ಆಕೆಯ ಪ್ರಕಾರ ಸಾಕು ಪ್ರಾಣಿಗಳನ್ನು ಪ್ರಾಣಿಗಳಂತೆಯೇ ನೋಡಬೇಕು, ಅವನ್ನು ಮನುಷ್ಯರಂತೆ ಒಳಮನೆ, ಅಡುಗೆಮನೆ, ಹಾಸಿಗೆ
ತನಕ ಕರೆದೊಯ್ದು ಮುದ್ದು ತೋರಿಸುವ ಅಗತ್ಯ ಇಲ್ಲ. ನೀವು ಹಾಸಿಗೆ ಕೊಡಿ, ಗೋಣಿಚೀಲ ಕೊಡಿ ಅವಕ್ಕೆ ಎರಡೂ ಒಂದೇ!
ಎಂದು ವಾದ ಮಂಡಿಸುವ ನನ್ನ ಅಮ್ಮ,
ಕೊಟ್ಟಿಗೆಯಲ್ಲಿದ್ದ ಬೆಳ್ಳಿ ಭಾಮು, ಪುಟ್ಟಿ, ಆದಿ ಎಂಬ ನಾಮಾಂಕಿತ ಗೋವುಗಳ ಜೊತೆಗೆ ಗಂಟೆಗಟ್ಟಲೆ ಏಕಮುಖ ಸಂವಹನ
ನಡೆಸುತ್ತಿದ್ದಳಾದರೂ, ಬೆಕ್ಕು, ನಾಯಿಗಳ ನೆರಳೂ ಆಕೆಗೆ ಆಗುತ್ತಿರಲಿಲ್ಲ.

ಇಂತಿಪ್ಪ ನನ್ನ ಅಮ್ಮನ ಸಮ್ಮುಖ ಈ ಹೊಸ ಬೆಕ್ಕನ್ನು ತಂದಿದ್ದನ್ನು ಅರುಹಿ ಸಂಭಾಳಿಸೋದು ಯಾರು ಎಂಬುದು ನಮ್ಮ
ಮುಂದಿದ್ದ ದೊಡ್ಡ ಪ್ರಶ್ನೆಯಾಗಿತ್ತು. ಜೊತೆಗೆ ಮನೆಯಲ್ಲಿ ಅದಾಗಲೇ ಗಿಳ್ಳಿ ಎಂಬ ಹಿಂದೆಂದೂ ಒಂದೂ ಇಲಿ ಹಿಡಿಯದ ಬೆಕ್ಕು
ಒಲೆಯ ಹಿಂದೆ, ಕೆಲವೊಮ್ಮೆ ಬೆಚ್ಚಗಿನ ಬೂದಿಯ ಮೇಲೆ ಮಲಗಲೆಂದು ಒಲೆಯನ್ನು ಕೆದರಿ ಹಾಕಿ ಅಮ್ಮನ ಕೋಪ ಕಟಾಕ್ಷಕ್ಕೆ
ಆಗಾಗ್ಯೆ ಗುರಿಯಾಗುತ್ತಿತ್ತು.

ಅಡಿಗೆ ಕೊಣೆಯಲ್ಲಿ ಓಡಾಡೋ ಅದನ್ನು ಅಮ್ಮ ಎಲ್ಲ ರೀತಿಯಿಂದಲೂ ಹೀಯಾಳಿಸುತ್ತಿದ್ದರೆ ಅದು ಮಾತ್ರ ನನಗೂ ಈ
ಬೈಗುಳಿಗೂ ಯಾವ ಸಂಬಂಧ ಇಲ್ಲ ಸರ್ ನಾ ತುಂಬಾ ಒಳ್ಳೆಯವನು ಎನ್ನುತ್ತಾ ಚಕ್ಕುಲಿಯಾಗಿ ಮತ್ತೂ ಗಾಢ ನಿದ್ದೆ
ಮಾಡುತ್ತಿತ್ತು.

ಹೀಗೆ ಹೊತ್ತಲ್ಲದ ಹೊತ್ತಲ್ಲಿ ಮತ್ತೊಂದು ಬೆಕ್ಕು ತಂದು ಮನೆಗೆ ಸೇರಿಕೊಳ್ಳುವ ಬಯಕೆ ಆದಾಗಲೆಲ್ಲ ನಮ್ಮದೊಂದು
ಪುಟ್ಟ ಡ್ರಾಮಾ ಟೀಂ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿತ್ತು. ಅಮ್ಮ ಒಬ್ಬಳು ಬಿಟ್ಟು ಇನ್ನುಳಿದವರಿಗೆಲ್ಲ ಅವರವರ ಪಾತ್ರ,
ಸಂಭಾಷಣೆ ನೀರು ಕುಡಿದಷ್ಟೇ ಸರಳವಾಗಿ ರೂಢಿಯಾಗಿತ್ತು.

ಹಿತ್ತಲ ಬಾಗಿಲಿಂದ ಬೆಕ್ಕನ್ನು ಒಳಗೆ ಬಿಟ್ಟು, ಮುಂದಿನ ಪಡಸಾಲೆಯಲ್ಲಿ ಏನೇನೂ ಗೊತ್ತಿಲ್ಲದವರಂತೆ ಬಂದು ಕೂತು
ಬಿಡುತ್ತಿದ್ದೆವು. ಮನೆಗೆ ಬೆಕ್ಕು ತಾನಾಗೇ ಬಂದು ಸೇರಿದರೆ ಒಳ್ಳೇದು ಎಂದು ಅಮ್ಮನಿಗೆ ಅವರಮ್ಮ ಅದ್ಯಾವುದೋ ಕಾಲದಲ್ಲಿ
ಹೇಳಿದ ಮಾತನ್ನು, ಅದ್ಯಾವುದೋ ಒಂದು ಗಳಿಗೆಯಲ್ಲಿ ನಮ್ಮ ಮುಂದೆ ಹೇಳಿದ್ದೇ ತಪ್ಪಾಗಿತ್ತು. ನಾವು ಹೀಗೆ ಹಿತ್ತಲ
ಬಾಗಿಲಿನಿಂದ ಮನೆಗೆ ಸೇರಿಸಿ ತಾನಾಗೇ ಬೆಕ್ಕು ಬಂತು ಎಂದಾಗ ಉಪಾಯ ಇಲ್ಲದೆ ಪಾಪದ ನನ್ನಮ್ಮ, ಅವರಮ್ಮನ ಮಾತನ್ನು
ನೆನೆದು, ಬೆಕ್ಕನ್ನು ಒಲ್ಲದ ಮನಸಲ್ಲೇ ಆದರೂ ಒಳಗೆ ಸೇರಿಸಿಕೊಳ್ಳಲೇ ಬೇಕಾಗುತ್ತಿತ್ತು.

ಆಮೇಲೆ ಬೆಕ್ಕಿನ ತಲೆಗೆ ಸ್ವಲ್ಪ ತೆಂಗಿನ ಎಣ್ಣೆ ಸವರಿ ಅಡಿಗೆ ಒಲೆಯ ಸುತ್ತ ೩ ಬಾರಿ ಅದನ್ನ ಹಿಡಿದು ತಿರುಗಿಸಿದರೆ ಆ ದಿನದಿಂದ
ಅದು ನಮ್ಮ ಬೆಕ್ಕು.

ಹಾಗೆ ಬಂದ ನಂತರ ಅದಕ್ಕೆ ನಾಮಕರಣವೂ ಆಗಬೇಕಲ್ಲ. ಸಾಮಾನ್ಯವಾಗಿ ಯಾವ ದಿನ ತಂದಿದ್ದೆವೋ ಆ ವಾರದ ಹೆಸರಿನ
ಆರಂಭದ ಅಕ್ಷರದಲ್ಲೇ ಹೆಸರಿಡೋದು ನಮ್ಮ ಮನೆಯ ಅಲಿಖಿತ ನಿಯಮ. ಆದರೆ ಈ ಬಾರಿ ಆ ಬೆಕ್ಕಿನ ಮರಿಯ ಅದಾ,ನಜಾಕತ್,
ನೋಡಿ ಅದಕ್ಕೆ ಐಶ್ವರ್ಯ ಅನ್ನೋ ಹೆಸರಿಟ್ಟಿದ್ದೆವು. ಆಕೆ ನಾವು ಆ ತನಕ ನೋಡಿದ, ನಮ್ಮ ಮನೆಯಲ್ಲಿ ಸಾಕಿದ ಬೆಕ್ಕುಗಳಲ್ಲಿ
ಚಂದ ರೂಪಿನವಳು. ಜಗದೇಕ ಸುಂದರಿ

ಹಾಗೆ ಬಂದು ಮನೆ ಸೇರಿದ ‘ಬಿಲ್ಲಿ’ ನಮ್ಮ ಮನೆಯ ಎಲ್ಲರ ಮುದ್ದು ಮರಿಯಾಗಿಬಿಟ್ಟಳು.
ಆಕೆಯನ್ನ ಹೇಗೆ ಮುದ್ದೆ ಮಾಡಿ ತೀಡಿ ಹೇಗೆ ತಿರುಚಿ ಮಲಗಿಸಿದರು ಆಕೆ ಅದೇ ಆಕಾರದಲ್ಲಿ ಮಲಗಿರುತ್ತಿದ್ದಳು. ಮೈ ಶಾಖ,
ಅಡುಗೆ ಒಲೆಯ ಹಿಂದಿನ ಬಿಸಿಗೆ ಮಲಗುವುದೆಂದ್ರೆ ಅದಕ್ಕೆ ಪ್ರಾಣ...
ದಿನಕಳೆದಂತೆ ಇನ್ನು ಚಂದ, ಮತ್ತೂ ಚಂದ ಆಗುತ್ತಾ ಹೋದಳು. ಅವತ್ತು ಪಪ್ಪನ ಸ್ನೇಹಿತರು ಮನೆಗೆ ಬಂದಾಗ ಐಶ್ವರ್ಯಳನ್ನು
ನೋಡಿ, ಅರೇ ಈ ಬೆಕ್ಕು ಎಲ್ಲಿಂದ ತಂದಿರಿ? ಇದು German long hair ಅನ್ನುವ ತಳಿ, ಭಾರತದಲ್ಲಿ ಅಪರೂಪವೇ, ಎಂದು
ಆಶ್ಚರ್ಯ ಪಟ್ಟಾಗ. ಆಕೆಗೆ ಐಶ್ವರ್ಯ ಎಂದು ಹೆಸರಿಟ್ಟಿದ್ದು ಸಾರ್ಥಕ ಅನಿಸಿತ್ತು.

ಹಾಗೆ ಲಾಸ್ಯ, ಲಾವಣ್ಯಗಳಿಂದ, ನಯ ನಾಜೂಕನ್ನೇ ಹೊದ್ದು ಆಕರ್ಷಣೀಯವಾಗಿ ಇದ್ದ ಐಶ್ವರ್ಯಾ ಹೊಟ್ಟೆ ದಿನದಿಂದ ದಿನಕ್ಕೆ
ದೊಡ್ಡದಾಗುತ್ತಾ ಬಂತು.
ನಮಗೆಲ್ಲರಿಗೂ ಖುಷಿ! ಬೆಕ್ಕು ಮುಚ್ಚಿಟ್ಟ ಮರಿಗಳನ್ನು ಹುಡುಕಿ, ಕಣ್ಣು ಬಿಡುವ ತನಕ ದಿನವೂ ಅವನ್ನು ಎಣಿಸಿ ಮುದ್ದಿಸಿ
ಬರುವ ಕಾತುರದಲ್ಲಿ ನಾವಿದ್ದೆವು. (ನಾವು=ನಾನು,ತಂಗಿ, ಅತ್ತೇ, ಅಜ್ಜಿ, ಪಪ್ಪ, ಚಿಕ್ಕಪ್ಪ)
ಥೇಟ್ ಮುದ್ದಿನ ಮಗಳು ಬಾಣಂತನಕ್ಕೆ ಬಂದಂಥ ಸಂಭ್ರಮ ಅದು.

ಬೆಕ್ಕುಗಳು ಕತ್ತಲಲ್ಲೇ ಮರಿ ಹಾಕುತ್ತವೆ ಹಾಕಿದ ಮೊದಲ ಮರಿ ತಿಂದು ಮುಗಿಸುತ್ತವೆ, ೭ ಜಾಗೆ ಬದಲಿಸುತ್ತವೆ ಹೀಗೆ ಬೆಕ್ಕಿನ
ಬಾಣಂತನದ ಕುರಿತು ಏನೇನೋ ನಂಬಿಕೆಗಳಿವೆ ಐತಿಹ್ಯಗಳೂ ಇವೆ. ಆದರೆ ಅದೆಲ್ಲ ಸುಳ್ಳು ಅನ್ನೋದನ್ನ ನನಗೆ ಮನವರಿಕೆ
ಮಾಡಿಕೊಟ್ಟಿದ್ದೆ ಐಶ್ವರ್ಯ.

ಆ ದಿನ ನಮ್ಮ ಮನೆಯ ಮೂಲೆಯ ಕೋಣೆಯಲ್ಲಿ ಓದುತ್ತ ಕುಳಿತಿದ್ದೆ. ನಮ್ಮ ಮುದ್ದು ಐಶು ಬಂದು ನನ್ ಕಾಲ್ ಮೇಲೆ
ಮಲಗಿತು. ಅದು ಆಕೆಯ ಯಾವತ್ತಿನ ರೂಡಿ. ಆದರೆ ಇವತ್ತು ಪ್ರತಿದಿನದಂತಲ್ಲ ಏನೋ ಹೇಳೋರ್ ಥರ ಪುಸ್ತಕ ವನ್ನ
ಪರಚೋದು ಕಾಲು ಒಮ್ಮೆಲೇ ನೆಟ್ಟಗೆ ಮಾಡಿ ವಿಚಿತ್ರ ದನಿಯಲ್ಲಿ ಕೂಗೋದು. ಮಲಗಿದ ಕಡೆಯೇ ಕಾಲಿನಿಂದ ಕೆದರಿ ಉಗುರು
ಹೊರ ತೆಗೆಯುವುದು ಹೀಗೆಲ್ಲ ವಿಚಿತ್ರ ವರ್ತನೆ ಮಾಡೋಕೆ ಶುರು ಮಾಡಿತು.

ಅದು ಮಾಡ್ತಿರೋದನ್ನ ನೋಡಿದ್ರೆ ಅದಕ್ಕೆ ಹೊಟ್ಟೆನೋವು ಬಂದಿದೆ ಎಂದು ಅನಿಸತೊಡಗಿತ್ತು ಆದರೆ ಆಯಾ ತನಕ ಕೇಳಿದ
ಕಥೆಗಳ ಪ್ರಕಾರ ಮರಿ ಹಾಕಲು ಬೆಕ್ಕಿಗೆ ಕತ್ತಲೆ ಜಾಗ ಬೇಕಲ್ಲ? ಇದನ್ನ ನಾನೇ ಒಯ್ದು ಅಟ್ಟದ ಮೇಲಿದ್ದ ಹಳೇ ಹಿತ್ತಾಳೆ
ಹಂಡೆಯ ಒಳಗೆ ಇಟ್ಟು ಬರಲಾ? ಎದ್ದು ಬಿಡಲ? ಎನ್ನುವ ಯೋಚನೆ ಬಂತಾದರೂ, ನನ್ನ ಮೈಯ್ಯ ಮೇಲಂತೂ ಮರಿ ಹಾಕಲ್ಲ
ಅನ್ನೋ ಒಂದು ವಿಶ್ವಾಸದೊಂದಿಗೆ ಅದನ್ನ ತೊಡೆಯ ಮೇಲೆ ಮಲಗಿಸಿ ಕೊಂಡು ಸುಮ್ಮನೆ ಅದರ ತಲೆ, ಹೊಟ್ಟೆ ಕೊರಳನ್ನ ಸವರುತ್ತ ಕುಳಿತೆ. ಹೀಗೆ ಅಂದುಕೊಂಡು ಗಳಿಗೆಯೂ ಕಳೆದಿಲ್ಲ ನನ್ನ ಅರಿವಿಗೆ ಬರುವ ಮೊದಲೇ ನನ್ನ ತೊಡೆಮೇಲೆ ನಮ್ಮ ಬಿಲ್ಲು, ಮರಿ ಹಾಕಿಬಿಟ್ಟಿತ್ತು. ಆ ಅನುಭವ ಬೇಕೆಂದರೂ ಸಿಗುವಂತದ್ದಲ್ಲ.
ಕೆಲವರಿಗೆ ಹೇಸಿಗೆ, ಕೆಲವರಿಗೆ ಅಯ್ಯೋ ರಾಮ್ ರಾಮನ ನೆನಪು, ಕೆಲವರಿಗೆ ನನ್ ಡ್ರೆಸ್ ಚಿಂತೆ,ನಾನು ಮಾತ್ರ ಆ ಗಳಿಗೆಗಳನ್ನು ಆಸ್ವಾಧಿಸುವುದರಲ್ಲಿ ಮಗ್ನಳಾಗಿದ್ದೆ.
ನನಗೆ ಆ ಅನುಭವ ಎಷ್ಟು ರೋಮಾಂಚನ ತಂದಿತ್ತು ಎಂದರೆ, ಮುಂದಿನ ೩ ಮರಿಗಳನೂ ಅದು ನನ್ ತೊಡೆ ಮೇಲೆ ಹೆತ್ತು, ಕೆಳಗೆ
ನಿಂತು ಹೊಕ್ಕಳ ಬಳ್ಳಿಯನ್ನು ತನ್ನ ಹಲ್ಲಿನಿಂದ ತುಂಡು ಮಾಡಿ ಮತ್ತೆ ತೊಡೆ ಮೇಲೆ ಬಂದು ಮಲಗಿ ಮತ್ತೆ ನೋವು
ಕೊಡುತ್ತಿತ್ತು. ನಾನು ಪ್ರತಿಸಲ ಅದು ಹುಡುಗಿಯಿಂದ ಅಮ್ಮನಾಗಿ ಪರಿವರ್ತನೆ ಗೊಂಡ ರೀತಿಯನ್ನು ಆ ಜವಾಬ್ದಾರಿ
ನಿರ್ವಹಿಸುತ್ತಿದ್ದ ಪರಿ ಕಂಡು ಮೂಕ ವಿಸ್ಮಿತಳಾಗಿದ್ದೆ.

ಯಾರು ಹೇಳಿಕೊಟ್ಟರು ಅದಕ್ಕೆ? ಕಣ್ಣು ಬಿಡದ ಆ ಮರಿಗಳನ್ನು ತನ್ನ ಮೊಲೆಗೆ ಅಂಟಿಸಿಕೊಂಡು ಹಾಲುಣಿಸುವ ಪರಿಯ,
ಮರಿಯ ಮಯ್ಯಸುತ್ತ ಇರೋ ಜಿಡ್ಡು ನೆಕ್ಕಿ ಅದನ್ನ ಶುಭ್ರ ಗೊಳಿಸೋ ಕ್ರಮವ? ಪ್ರಕೃತಿ ಅದೆಷ್ಟು ಅಧ್ಭುತ ಅಲ್ವಾ ?
ನನಗನಿಸಿದ ಮಟ್ಟಿಗೆ ಬೆಕ್ಕಿನ ಬಾಣಂತನದಷ್ಟು ಸ್ವಚ್ಛ ಶುಭ್ರ ಹೆರಿಗೆ, ಮತ್ತ್ಯಾವ ಜೀವಿಯೂ ಮಾಡಿಕೊಳ್ಳಲು ಸಾಧ್ಯವೇ
ಇಲ್ಲವೇನೋ.
ಏನೇ ಹೇಳಿ, ಇದೊಂದು ಜೀವಕಾಲದ ಅಮೂಲ್ಯ ಅನುಭವ. ಅದಕ್ಕೆ ಅಕ್ಷರ ರೂಪ ಕೊಡುವುದು ಕಷ್ಟ ಅನಿಸುತ್ತದೆ. ಆದರೆ ನೀವು
ನನ್ನನ್ನ ಎಂದಾದರೂ ಭೇಟಿ ಆದಾಗ, ಅದನ್ನ ಮಾತಲ್ಲಿ ವಿವರಿಸೋ ಪ್ರಯತ್ನ ಖಂಡಿತ ಮಾಡೇನು! ಆದರೆ ಅಕ್ಷರಗಳಿಗೆ ದಕ್ಕದ
ಭಾವಗಳನ್ನು ಮಾತಿನ ಮಾಲೆಯಲ್ಲಿ ಕಟ್ಟಿ ಹಾಕಲಾದೀತೆ?

ಅಲ್ಲಾದರೂ ನಾನೆ ಸೋಲುತ್ತೇನೆ!
ಐಶು ಈಗಿಲ್ಲ. ಆದ್ರೆ ಅವಳ ನೆನೆಪು, ನನಗೆ ಮೊದಲ ಬಾರಿ ಹೆರಿಗೆ ನೋವು ಬಂದಾಗ ಕಾಡಿದ್ದಂತೂ ನಿಜ.
ಇದು ನಮ್ಮ ಬೆಕ್ಕು ಐಶ್ವರ್ಯಳ ಚೊಚ್ಚಲ ಬಾಣಂತನದ ಕಥೆ.
- ಅಮಿತಾ ರವಿಕಿರಣ್
ಚಿತ್ರ ಕೃಪೆ: ಅಂತರ್ಜಾಲ

ಅನಿವಾಸಿ ಬಳಗದ ಯುಗಾದಿ ಸಂಭ್ರಮ

ಅನಿವಾಸಿ ಬಳಗದ 'ರಂಗ' ಯುಗಾದಿ  
- ಅಮಿತಾ ರವಿಕಿರಣ್

ಈ 'ಅನಿವಾಸಿ' ಎಂಬ ಪದ, ಕನ್ನಡ ಬಲ್ಲ ಸರ್ವರಿಗೂ ಅರ್ಥವಾಗುವ ರೀತಿ ಒಂದು ತೆರನಾದರೆ, ನನಗೆ ಅರ್ಥವಾಗುವ ರೀತಿಯೇ ಬೇರೆ. ಅನಿವಾಸಿ ಎಂಬುದು ದೇಶದಿಂದ ದೂರವಿರುವ ಅಥವಾ ಪ್ರಸ್ತುತ ತಾಯಿನೆಲದಲಿ, ಸ್ವದೇಶದಲ್ಲಿ ನೆಲೆಸದ ಅನ್ನುವ ಅರ್ಥವಿದ್ಯಾಗ್ಯೂ ನನಗೆ ಅನಿವಾಸಿ ಎಂಬ ಪದ ಕೇಳಿದೊಡನೆ ಆತ್ಮೀಯ, ಹತ್ತಿರದ, ಪ್ರೀತಿಯ, ಅಕ್ಕರೆಯ ಅಂತಃಕರಣದ, ನಾಡು ನುಡಿಗಳ ಕುರಿತು ಸದಾ ತುಡಿಯುವ ಮಿಡಿಯುವ ಮನಸುಗಳ, ನನ್ನದಲ್ಲದ ನೆಲದಲ್ಲಿ ನನ್ನ ತವರಿನಂತಿರುವ ಒಂದು ಸಹೃದಯಿ ಗುಂಪು ಎಂಬ ಚಿತ್ರ ಮನಃಪಟಲದಲ್ಲಿ ಮೂಡುತ್ತದೆ. ಸಾಹಿತ್ಯ ಸಂಗೀತಗಳಿಂದ ಆಂತರ್ಯವನ್ನು ಚೊಕ್ಕಟವಾಗಿಡಲು, ಸೃಜನಶೀಲತೆಯ ಸ್ಪುರಣದಂತಿರುವ ಅನಿವಾಸಿ ಬಳಗಕ್ಕೆ ಏಳುವರ್ಷಗಳ ಹಿಂದೆ ನನ್ನ ಪರಿಚಯಿಸಿದ್ದು ನಮ್ಮ ಕಥೆಗಾರ್ತಿ ಕವಯಿತ್ರಿ ಅದಮ್ಯ ಉತ್ಸಾಹದ ಚಿಲುಮೆಯಂತಿರುವ ಡಾ ಪ್ರೇಮಲತಾ.

ಅನಿವಾಸಿಯ ಪ್ರತಿಯೊಬ್ಬ ಸದಸ್ಯರ ಕುರಿತು ನನಗೆ ಗೌರವ, ಅಚ್ಚರಿ! ಎಲ್ಲರೂ ಒಂದಲ್ಲ ಕ್ಷೇತ್ರದಲ್ಲಿ ಸಾಧನೆಗೈದವರು, ವೃತ್ತಿಯೊಂದಿಗೆ ಪ್ರವೃತ್ತಿಯನ್ನೂ ಹವ್ಯಾಸ ಆಸಕ್ತಿಗಳನ್ನು ಅಷ್ಟೇ ಆಸ್ಥೆಯಿಂದ ಬೆಳೆಸಿಕೊಂಡು ಅದರ ನಿರಂತರತೆಯನ್ನು ಕಾಪಾಡಿಕೊಂಡು ಬಂದವರು. ಇಲ್ಲಿ ಬರೆಯುವ ಎಲ್ಲರ ಘನವಾದ ಬರವಣಿಗೆಯ ಮುಂದೆ ನನಗೆ ನನ್ನ ಬರಹಗಳು ಆವತ್ತಿಗೂ, ಇವತ್ತಿಗೂ, ಯಾವತ್ತಿಗೂ ತರಗೆಲೆಯಂತೆ ಅನಿಸುತ್ತದೆ. ನನ್ನ ಜೀವನದಲ್ಲಿ ಅನಿವಾಸಿ ಈಗ ಬರೀ ಒಂದು ವಾಟ್ಸಾಪ್ ಗುಂಪು ಅಥವಾ ಬ್ಲಾಗ್ ಬರಹಗಳ ವೇದಿಕೆಗಿಂತ ಹೆಚ್ಚಿನದ್ದು. ನನಗೆ ಶಿಸ್ತು, ಬದ್ಧತೆಯನ್ನು ಮತ್ತೆ ಮತ್ತೆ ಕಲಿಸುವ ತಿಳಿಸುವ ಅನಿವಾಸಿ ಬಳಗವನ್ನು
ಒಮ್ಮೆಯಾದರೂ ಭೇಟಿ ಮಾಡಬೇಕು ಅನ್ನುವುದು ನನ್ನ ಬಹುಕಾಲದ ಕನಸಾಗಿತ್ತು.

ಊರು ಸುಟ್ಟರೂ ಹಣಮಪ್ಪ ಹೊರಗೆ ಅನ್ನುವ ಗಾದೆ ಮಾತಿನಂತೆ, UK ಯಲ್ಲಿ ಇದ್ದಾಗ್ಯೂ ಈ ತನಕ ನನಗೆ ಕನ್ನಡ ಬಳಗ ಅಥವಾ ಅನಿವಾಸಿಯ ಯಾವ ಕಾರ್ಯಕ್ರಮದಲ್ಲೂ ಭಾಗಹಿಸಲು ಆಗಿಲ್ಲ, ಕಾರಣ ವಿಮಾನಯಾನ ಅಥವಾ ಜಲಯಾನ ಮಾಡಿ ಬರಬೇಕಾದ ಅನಿವಾರ್ಯತೆ ಒಂದುಕಡೆಯಾದರೆ, ಪುಟ್ಟ ಮಕ್ಕಳು ಇರುವ ಮನೆಯಲ್ಲಿ ಎಲ್ಲ ಜವಾಬ್ದಾರಿಗಳು ಜಯಮಾಲೆಯಂತೆ ಕೊರಳಿಗೆ ಬಂದು ತಾನೇ ತೂಗು ಹಾಕಿಕೊಂಡಿರುವ ಬಿಡಿಸಿಕೊಳ್ಳಲಾರದ ಜವಾಬ್ದಾರಿಗಳು ಮತ್ತೊಂದೆಡೆ.
ಅದು ಹೇಗೋ ಎಲ್ಲಾ ಗ್ರಹ ನಕ್ಷತ್ರ ಬಲ ಕೂಡಿ ಬಂತು; ನಾನೂ ಈ ಸಲದ ಕನ್ನಡ ಬಳಗ ಯುಕೆ ಮತ್ತು ಲೆಸ್ಟರ್ ಕನ್ನಡ ಬಳಗದ ಯುಗಾದಿ ಸಂಭ್ರಮದಲ್ಲಿ ಭಾಗವಹಿಸುವ ಯೋಗಾಯೋಗ ಒದಗಿ ಬಂತು.
ಈ ಯುಗಾದಿ ನಿಜಕ್ಕೂ, ನಾಡಿನಲ್ಲಿದ್ದು ಯುಗಾದಿ ಹಬ್ಬ ಆಚರಿಸಿದ್ದಕ್ಕಿಂತ ಹೆಚ್ಚು ಸಂಭ್ರಮದಲ್ಲಿ ಜರುಗಿತು.
ಪ್ರತಿಬಾರಿ ಅನಿವಾಸಿ ಬ್ಲಾಗ್ ಮತ್ತು ಗ್ರೂಪ್ ಫೋಟೋಗಳಲ್ಲಿ ನೋಡಿ ಖುಷಿ ಪಡುತ್ತಿದ್ದ ಅನಿವಾಸಿ ಸಾಹಿತಿಕ ಕಾರ್ಯಕ್ರಮದಲ್ಲಿ ನಾನೂ ಈ ಬಾರಿ ಭಾಗವಹಿಸಿದ್ದು ನನಗೆ ಹೆಮ್ಮೆಯ ಸಂಗತಿ.

ಅನಿವಾಸಿ ಕಾರ್ಯಕ್ರಮ

ಪ್ರತಿಬಾರಿಯಂತೆ, ಈ ಸಲವೂ ಕಾರ್ಯಕ್ರಮಕ್ಕೆ ಬರುವ ಅಥಿತಿಗಳ ವೈಶಿಷ್ಟತೆಗೆ ಅನುಗುಣವಾಗಿ ಕಾರ್ಯಕ್ರಮವನ್ನು ರೂಪುಗೊಳಿಸುವುದು ಎಂಬ ನಿರ್ಧಾರವಾದ ಕೆಲ ದಿನಗಳಲ್ಲೇ ರಂಗಭೂಮಿ, ನಟ ನಿರ್ದೇಶಕ, ಕಿರುತೆರೆ, ಬೆಳ್ಳಿತೆರೆಯ ಮೇಲೆ ತಮ್ಮ ವಿಶಿಷ್ಟ ಛಾಪು ಮೂಡಿಸಿ ನೆನಪಿನಲ್ಲಿ ಉಳಿಯುವಂಥ ಹಲವಾರು ಕ್ರೀಯಾಶೀಲ ಪ್ರಸ್ತುತಿಗಳನ್ನು ರಂಗದಮೇಲೆ ನಟಿಸಿ ನಿರ್ದೇಶಿಸಿದ ಅದ್ಭುತ ಕಲಾವಿದ ಶ್ರೀ ಶ್ರೀನಿವಾಸ ಪ್ರಭು ಅವರು ಅತಿಥಿಯಾಗಿ ಬರುತ್ತಿದ್ದಾರೆ ಎಂಬ ವಿಷಯ ಗೊತ್ತಾದ ಮರುಗಳಿಗೆಯಿಂದ ಅನಿವಾಸಿ ಅಂಗಳ ಮತ್ತಷ್ಟು ಕ್ರಿಯಾಶೀಲವಾಯಿತು .
ಎಲ್ಲ ಚರ್ಚೆಗಳು, zoom, ಗೂಗಲ್ ಮೀಟ್ ಗಳಲ್ಲಿ ವಿಚಾರ ವಿನಿಮಯದ ನಂತರ, ಅನಿವಾಸಿ ಬಳಗದ ಉತ್ಸಾಹಿ ದಂಪತಿಗಳಾದ ಅನ್ನಪೂರ್ಣ ಮತ್ತು ಆನಂದ ಅವರು ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ಹೊತ್ತು, ಎಲ್ಲರ ಸಲಹಾ ಸೂಚನೆಗಳನ್ನು ಪರಾಂಬರಿಸಿ ರಂಗಭೂಮಿ ನಾಟಕ ಕುರಿತಾದ ಕಾರ್ಯಾಗಾರವನ್ನುಏರ್ಪಡಿಸುವ ಕುರಿತು ಅತಿಥಿಗಳೊಂದಿಗೆ ಮಾತನಾಡಿ ಕಾರ್ಯಕ್ರಮದ ರೂಪರೇಶೆ ತಯಾರಿಸಿದರು. ಜೊತೆಗೆ ಆಸಕ್ತರು ಅತಿಥಿಗಳಿಗೆ ಪ್ರಶ್ನೆಗಳನ್ನು ಕೇಳಬೇಕು ಅಂತಿದ್ದರೆ ಮೊದಲೇ ಕಳುಹಿಸಬೇಕಾಗಿ ವಿನಂತಿಸಲಾಯಿತು.

ಕಾರ್ಯಕ್ರಮದ ದಿನಕ್ಕಿಂತ ಅದರ ಸಿದ್ಧತೆಗಳನ್ನು, ಪೂರ್ವ ತಯಾರಿಗಳನ್ನು ನೋಡುವುದು ಮತ್ತು ಆ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುವುದೇ ಒಂದು ಮಜಾ ಅನುಭವ. ನಾನು, ಡಾ ಶ್ರೀವತ್ಸ ದೇಸಾಯಿ ಅವರೊಂದಿಗೆ ಕಾರ್ಯಕ್ರಮದ ಮುನ್ನಾದಿನ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಹೋಗಿ ಮತ್ತಿಬ್ಬರು volunteers ಜೊತೆಗೂಡಿ ಖುರ್ಚಿ, ಮೇಜು ಜೋಡಿಸಿ ಬ್ಯಾನರ್ ಹಾಕಿ, ಎಲ್ಲವನ್ನು ಸಿದ್ಧಮಾಡಿ ಬಂದೆವು.
ಆದರೆ ಮರುದಿನ ಅನಿವಾರ್ಯ ಕಾರಣಗಳಿಂದಾಗಿ ಆ ಜಾಗದಲ್ಲಿ ಅನಿವಾಸಿ ಕಾರ್ಯಕ್ರಮ ನಿಗದಿತ ಸಮಯಕ್ಕೆ ನಡೆಯದೆ ಸ್ವಲ್ಪ ನಿರಾಸೆ ಉಂಟುಮಾಡಿತು. ಆದರೆ ಇತ್ತ ಹಬ್ಬದಡಿಗೆಯ ಅದ್ಭುತ ರುಚಿಯ ಬಾಳೆಎಲೆ ಊಟ ಉಂಡು ಸಾಂಸ್ಕೃತಿಕ ಕಾರ್ಯಕ್ರಮ ನೋಡುತ್ತಾ ಕುಳಿತಿರುವಾಗ ಅನಿವಾಸಿ ಕಾರ್ಯಕ್ರಮ ನಾಲ್ಕು ಘಂಟೆಗೆ ನಿಗದಿಯಾಗಿದೆ ಎಂದು ಸಂಘಟಕರು ತಿಳಿಸಿದ್ದು ನಿಜಕ್ಕೂ ಮನಸನ್ನು ಪ್ರಫುಲ್ಲ ಗೊಳಿಸಿತು.

ಅನಿವಾಸಿಯ ಈ ಕಾರ್ಯಾಗಾರಕ್ಕೆಂದೇ ಕಟ್ಟಿದ್ದರೇನೋ ಅನ್ನುವಷ್ಟು ಅಚ್ಚುಕಟ್ಟಿನ ಪುಟ್ಟ ಸುಂದರ ಕೋಣೆಯಲ್ಲಿ ಆಸಕ್ತರು ಸೇರಿದ ಮೇಲೆ, ಕಾರ್ಯಕ್ರಮದ ಆರಂಭಕ್ಕೆ ಒಂದು ನಾಂದಿ ಗೀತೆ ಹಾಡುವ ಅವಕಾಶ ನನಗೆ ಒದಗಿ ಬಂತು. ಕಾರ್ಯಕ್ರಮವನ್ನು ಅನ್ನಪೂರ್ಣ ಅವರು ಈ ಮೊದಲೇ ಕಳಿಸಲಾಗಿದ್ದ ಪ್ರಶ್ನೆಗಳನ್ನು ಒಂದೊಂದಾಗಿ ಸ್ಪಷ್ಟತೆಯಿಂದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀನಿವಾಸ ಪ್ರಭು ಅವರಿಗೆ ಕೇಳುತ್ತ ಹೊದರು. ಶ್ರೀನಿವಾಸ ಪ್ರಭುಗಳು ಕೂಡ ಪ್ರತಿ ಪ್ರಶ್ನೆಗೂ ತಮ್ಮ ಅನುಭವದ ಬುತ್ತಿಯಿಂದ ರುಚಿಯಾದ ತುತ್ತುಗಳನ್ನೇ ನಮಗೆ ಉಣಬಡಿಸಿದರು.
ಒಂದು ನಾಟಕವನ್ನು ಪುಸ್ತಕದಿಂದ ರಂಗದ ಮೇಲೆ ತರುವಾಗ ಎದುರಾಗುವ ಸವಾಲುಗಳು, ಎಲ್ಲಿ ನಿಯಮಗಳನ್ನು ಸಡಿಲಿಸಬಹುದು , ಯಾವುದನ್ನು ಸಡಲಿಸಬಾರದು? ಹವ್ಯಾಸಿ ರಂಗಭೂಮಿ ನಟರಿಗೆ ಎದುರಾಗುವ ಸಮಸ್ಯೆಗಳು. ಕ್ರಿಯಾಶೀಲ ಜಗತ್ತಿನ ವಿಪರ್ಯಾಸಗಳ ಕುರಿತು ಸ್ಪಷ್ಟ ಮಾತುಗಳಲ್ಲಿ ವಿವರಿಸಿದರು.
ಅವರ ಮಾತುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇಳುಗರನ್ನು ಅದೆಷ್ಟು ತಾಕಿದವೆಂದರೆ, ಒಂದು ನಾಟಕದ ತಂಡವನ್ನೇ ಕಟ್ಟುವ ಹುರುಪಿನಲ್ಲಿ ಆಸಕ್ತರ ಪಟ್ಟಿಕೂಡಾ ಸಿದ್ಧವಾಯಿತು. ಇವೆಲ್ಲ ಖುಷಿಯ ವಿಷಯಗಳು ಜರುಗುವಾಗ ದೇಸಾಯಿಯವರು ಕಾರ್ಯಕ್ರಮಕ್ಕೆ ನಿಗದಿಯಾದ ಒಂದು ಘಂಟೆಯ ಕಾಲಾವಕಾಶ ಮುಗಿಯುತ್ತ ಬಂದಿದ್ದನ್ನು ನಿರ್ವಾಹಕ ಗಮನಕ್ಕೆ ತಂದು ನಮ್ಮನ್ನೆಲ್ಲ ಮತ್ತೆ ವಾಸ್ತವಕ್ಕೆ ಕರೆತಂದರು. ಛೇ ಇಷ್ಟು ಬೇಗ ಮುಗಿದೇ ಹೋಯಿತೇ ಅನ್ನುವಂಥ ಭಾವ ದಟ್ಟವಾಗುವ ಮುನ್ನವೇ, ಆನಂದ ಅವರು ವಂದನಾರ್ಪಣೆ ನಡೆಸಿಕೊಟ್ಟರು.
ಅತಿಥಿಗಳೊಂದಿಗೆ ಕಾರ್ಯಕ್ರಮದಲ್ಲಿ ಹಾಜರಿದ್ದ ಅನಿವಾಸಿ ಸದಸ್ಯರು ಗ್ರೂಪ್ ಫೋಟೋ ತೆಗೆಸಿಕೊಂಡ ನಂತರವೂ ಶ್ರೀನಿವಾಸ ಪ್ರಭುಗಳೊಂದಿಗೆ ಹಲವರು ನಾಟಕದ ಬಗ್ಗೆ ಚರ್ಚೆ ನಡೆಸುತ್ತಿದ್ದುದು ಕಾರ್ಯಕ್ರಮ ಸಾರ್ಥಕ್ಯ ಎಂದರೂ ಅತಿಶಯೋಕ್ತಿ ಅಲ್ಲ.